ನಂದೀಶ್ವರ, ಭೃಂಗೀಶ್ವರ, ವೀರಭದ್ರ,
ದಾರುಕ, ರೇಣುಕ, ಶಂಖುಕರ್ಣ, ಗೋಕರ್ಣ,
ಏಕಾಕ್ಷರ, ತ್ರಯಕ್ಷರ, ಪಂಚಾಕ್ಷರ, ಷಡಕ್ಷರ,
ಸದಾಶಿವ, ಈಶ್ವರ, ಮಹೇಶ್ವರ, ರುದ್ರ,
ಘಂಟಾಕರ್ಣ, ಗಜಕರ್ಣ,
ಏಕಮುಖ, ದ್ವಿಮುಖ, ತ್ರಿಮುಖ, ಚತುರ್ಮುಖ, ಪಂಚಮುಖ,
ಷಣ್ಮುಖ, ಶತಮುಖ, ಸಹಸ್ರಮುಖ ಮೊದಲಾದ
ಗಣಾಧೀಶ್ವರರು ಇವರು,
ನಿತ್ಯಪರಿಪೂರ್ಣವಹಂಥ ಪರಶಿವತತ್ವದಲ್ಲಿ
ಜ್ಯೋತಿಯಿಂದ ಜ್ಯೋತಿ ಉದಿಸಿದಂತೆ ಉದಯಿಸಿದ
ಶುದ್ಧ ಚಿದ್ರೂಪರಪ್ಪ ಪ್ರಮಥರು.
ಅನಾದಿಮುಕ್ತರಲ್ಲ, ಅವಾಂತರಮುಕ್ತರೆಂಬ ನಾಯ ನಾಲಗೆಯ
ಹದಿನೆಂಟು ಜಾತಿಯ ಕೆರಹಿನಟ್ಟಿಗೆ ಸರಿಯೆಂಬೆ.
ಆ ಶ್ವಾನಜ್ಞಾನಿಗಳಪ್ಪವರ ಶೈವಪಶುಮತವಂತಿರಲಿ,
ಅವರಾಗಮವಂತಿರಲಿ.
ನಿಮ್ಮ ಶರಣರಿಗೆ, ನಿಮಗೆ, ಬೇರೆ ಮಾಡಿ ಸಂಕಲ್ಪಿಸಿ ನುಡಿವ
ಅಜ್ಞಾನಿ ಹೊಲೆಯರ ಎನಗೊಮ್ಮೆ ತೋರದಿರಯ್ಯಾ,
ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.