ನಿರುಪಾಧಿಕನಾಗಿ, ನಿರ್ವಂಚಕತ್ವದಿಂದ ದಾಸೋಹವ ಮಾಡಿ,
ಪರಿಣಾಮದಿಂದ ನಿತ್ಯದಾಸೋಹಿಯೆನಿಸಿದೊಡೆ,
ಆ ದಾಸೋಹಿಯೆ ಸದ್ಭಕ್ತನು, ಆತನೆ ಮಾಹೇಶ್ವರ,
ಆತನೇ ಪ್ರಸಾದಿ, ಆತನೇ ಪ್ರಾಣಲಿಂಗಿ,
ಆತನೇ ಶರಣ, ಆತನೇ ಐಕ್ಯ.
ಆತನೇ ಇಹಲೋಕ[ಪರಲೋಕ] ಪೂಜ್ಯನು, ಆತನೇ ಶ್ರೇಷ*,
ಆತನೇ ವಿದ್ವಾನ್, ಆತನೇ ಸುಜ್ಞಾನಿ,
ಇನಿತಲ್ಲದೆ ಶ್ರೀಗುರುಲಿಂಗಜಂಗಮ ಒಂದೆಯೆಂದು
ಭಾವಿಸದರ್ಚಿಸದೆ ವಿಚಾರಿ[ಸದ] ದುರ್ಭಾವಿ ಉಪಾಧಿಕನು, ವಂಚಕನು,
ದಾಸೋಹವ ಮಾಡಲರಿಯದಹಂಕಾರಿ, ಅಭಾಸನು, ಅಪೂಜ್ಯನು.
ಭಕ್ತನಲ್ಲ, ಮಾಹೇಶ್ವರನಲ್ಲ.
ಪ್ರಸಾದಿಯಲ್ಲ, ಪ್ರಾಣಲಿಂಗಿಯಲ್ಲ,
ಶರಣನಲ್ಲ; ಐಕ್ಯನಲ್ಲ;
ಆತನೇ ಮೂರ್ಖನು, ಆತನೇ ಅಜ್ಞಾನಿ, ಆತನೇತಕ್ಕೆಯೂ ಬಾತೆಯಯ್ಯಾ,
ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರಾ.