ಅಥವಾ
(6) (13) (1) (2) (0) (0) (0) (0) (0) (0) (0) (3) (0) (0) ಅಂ (1) ಅಃ (1) (1) (0) (2) (1) (0) (2) (0) (1) (0) (0) (0) (0) (0) (0) (0) (6) (0) (1) (0) (4) (5) (0) (5) (2) (3) (0) (2) (0) (0) (0) (3) (0) (7) (2) (0)

ಪದದಿಂದ ಪ್ರಾರಂಭವಾಗುವ ವಚನಗಳು:

ಆ ಪರಶಿವನ ಚಿದ್ವಿಲಾಸದಿಂದಾದ ಇಹದೊಳಗೆ ನರನಾಗಿ ಅರುವುಹಿಡಿದು ಕುರುಹುಕಂಡವಂಗೆ ಗರ್ವವುಂಟೆ ? ಅರುವು ಪಿಡಿಯದೆ ಕುರುಹುಗಾಣದೆ ಬರಿಯ ಬಾಯಿಲೆ ಬ್ರಹ್ಮವ ನುಡಿದರೆ ಬ್ರಹ್ಮನಾಗಬಲ್ಲರೆ ? ಬ್ರಹ್ಮನಾದ ಮೇಲೆ ಇಮ್ಮನ ಎಲ್ಲಿಹದೊ ? ತಾನು ಅದ್ವೆ ೈತನಾದ ಮೇಲೆ ದ್ವೆ ೈತವನಾಚರಿಸುವದುಂಟೆ ? ತಾನೇ ನಿಜ ಸರ್ವವೂ ಸುಳ್ಳೆಂಬುದುಂಟೆ ? ಅಹುದು ಅಲ್ಲ ಎಂಬುವುದುಂಟೆ ? ಗುರುವ ಹಿಂದುಗಳೆದು, ಕಟ್ಟಿದಾ ಲಿಂಗವ ಬಿಟ್ಟು, ಜಂಗಮವ ಜರಿಯಲುಂಟೆ ? ಅಖಂಡವ ತಿಳಿದು ಆ ಅಖಂಡವು ತಾನಾಗದೆ ಭಂಗಿ ಮುಕ್ಕಿದವನಂತೆ, ಅಂಗ ಬತ್ತಲೆಯಾಗಿ, ಮಂಗಮತಿಗೂಡಿ ಸಂಗವ ಸಂದು, ಒಂದಾಗದೆ ಭಂಗಾಗಿ ಹೋದರೋ ನಿರುಪಮ ನಿರಾಳ ಮಹತ್ಪ್ರಭು ಮಹಾಂತಯೋಗಿ.
--------------
ಮಡಿವಾಳಪ್ಪ / ಕಡಕೋಳ ಮಡಿವಾಳಪ್ಪ
ಆ ಪರಶಿವನ ನಿಜಸ್ವರೂಪವೇ ಬ್ರಹ್ಮಾಂಡವಾಗಿ, ಪಿಂಡಾಂಡವಾಗಿ, ಕರಣಂಗಳಾಗಿ, ಕರ್ಮಂಗಳಾಗಿ, ಸೃಷ್ಟಿ ಸ್ಥಿತಿ ಲಯಂಗಳಾಗಿ, ನೋವು ಸಾವುಗಳಾಗಿ, ತಾನೇ ಇದ್ದದ್ದು, ಸರ್ವವು ತಾನೆಂಬುದು ತಾನೇ ಮರೆತು, ಶಿಶುವು ತಾನಾಡುವ ಆಟದಲ್ಲಿ, ಕಲ್ಲಿಗೆ ಕಾಲ ತಗಲಿಸಿಕೊಂಡು ಅಳುವಂತೆ, ವಿಷಯದಿಚ್ಛೆಯಲ್ಲಿ ನೊಂದು ಶೋಕಿಸುತ್ತಿರಲು, ಆ ಶಿಶುವಿಗೆ ತಂದಿ ಬಂದು ಕಣ್ಣೀರೊರಸಿ, ಆ ಕಲ್ಲತಗಲಿದ ಕಾಲ್ನೋವಿಗೆ ಔಷದ್ಥಿಯ ಮಾಡಿ, ತನ್ನ ಹೆಂಡತಿಯ ಕರೆದು, ಮಗನ ಸಮಾಧಾನಮಾಡೆಂದು ಹೇಳಲು, ಆ ತಾಯಿಯೆತ್ತಿಕೊಂಡು, ಕಣ್ಣು, ಮೂಗು, ಕಿವಿ, ಬಾಯಿ, ಮೈ ಧೂಳವನ್ನೆಲ್ಲಾ ತಾ ಹೊದ್ದ ಮೇಲ್‍ಸೆರಗಿಲೊರಸಿ ಮೊಲೆಯುಣಿಸಿ, ತೊಟ್ಟಿಲೊಳು ಹಾಸಿ ಮಲಗಿಸಿ ಹೊಚ್ಚಿ ಹೆಂಗ ಮಂಗಲ ನುಡಿ, ನಮ್ಮಪ್ಪ ಅರಸ ಛೀಮಾರಿ ಛೀ ಛೀ ಛೀ ಅಳುಳುಳುಳುಳುಳೆಂದು ಹಾಡುತ್ತಿರಲು, ಆ ಶಿಶುವು ಆ ಔಷಧದಿಂದೆ ನೋವು ಹೋಗಿ, ತಾಯಿಯ ಮೊಲೆಹಾಲಿನಿಂದೆ ಹಸಿವು ಅಡಗಿ, ಆ ಜೋಗುಳಹಾಡಿಗೆ ಸೊಂಪುದೋರಿ ಸುಮ್ಮನಾಗಿ, ತೊಟ್ಟಿಲ ತೂಗುವುದರೊಳಗೆ ಜೋಕಬಂದು, ಸುಖನಿದ್ರೆಯೊಳ್ ಮೈಮರೆದಿರಲು, ಮಾಯೆಸರ್ಪನು ಬಂದು ಕಚ್ಚಿ ಕಾಣಿಸಿಕೊಳ್ಳದೆ ಹೋಗಲು, ಆ ತಾಯಿ ತಂದಿ ಉಂಡು ಮಂಚದಮ್ಯಾಲೆ, ರತಿಸಂಭೋಗಸುಖನಿದ್ರೆಯಲ್ಲಿರೆ, ಮಾಳಿಗೆ ಬಿದ್ದು ಮರಣವಾಗಲು, ಆ ತಾಯಿ ತಂದಿಯು ಮಗ ಈ ಮೂವರು ಮಾಳಿಗೆ ಬಿದ್ದು ಮರಣವಾದರೆಂಬುದಾಯಿತ್ತಲ್ಲದೆ, ಆ ಶಿಶುವಿನ ಸಾವು ಆರು ಅರಿಯರು. ಇದರ ಹಾಂಗೆ ತನ್ನ ವಿಷಯದಿಚ್ಛೆಗೆ ಓಡ್ಯಾಡಿ ಕಾಲನ ಬಾಧೆಗೆ ಬಿದ್ದು ಭವದುಃಖದೊಳಗಿರುವ ನರರಿಗೆ ತಾನೇ ಗುರುವಾಗಿ ಬಂದು, ಸಾನಂದಸಿದ್ಧರಾಮನು ಹೀನ ನರಕಿಗಳ ತಗೆದಂತೆ, ಆ ಶಿಷ್ಯನ ಕೈಹಿಡಿದೆತ್ತಿ ಸರ್ವಕರಣಗಳ ಶುದ್ಧಗೊಳಿಸಿ, ಶಿಕ್ಷೋಪದೇಶವಮಾಡಿ, ತನ್ನ ಚಿತ್‍ಶಕ್ತಿಯ ಕರಸಂಜ್ಞೆ ನುಡಿನೋಟದಿಂದೆ ತೋರಿ ಹೇಳಿ ಕಾಣಿಸಿಕೊಡಲು, ಆ ಚಿತ್‍ಶಕ್ತಿ ಹತಿಗೊಂಡು ನಿತ್ಯತ್ವದ ನುಡಿ ಮನದ ಮೈಲಿಗೆಯ ತೊಳೆದು ತನ್ನ ಮೇಲುಮುಸುಕಿದ ಮಹಾಜ್ಞಾನದ ಬೆಳಗಿನಲ್ಲಿ ಸರ್ವ ಅವಯವಂಗಳ ಕಸರು ಕಳೆದು, ಆತ್ಮಜ್ಞಾನದೊಳಗೆ ಅಖಂಡಜ್ಞಾನದಲ್ಲಿರಿಸಿ, ಬ್ರಹ್ಮಜ್ಞಾನವನಾಚ್ಛಾದಿಸಿ, ನಿಜಜ್ಞಾನದಲ್ಲಿ ಲೋಲ್ಯಾಡಿ, ಅರುವಿನ ಹರುಷದಲ್ಲಿ ಹಿಂದಿಂದು ಹೇಯವಾಗೆ ಮುಂದಿಂದು ಹಿತವಚನ ಮುಂದೆ ಅಲ್ಲಲ್ಲಾ, ಸರ್ವವು ಸುಳ್ಳು ಸುಳ್ಳೆಂಬ ಮಹದರುವಿನ ಅನುಭವದ ಶಿವೋಹಂ ಶಿವೋಹಂ ಶಿವೋಹಂ, ಸೋಹಂ, ಸೋಹಂ, ಸೋಹಂ, ನಮೋ ನಮೋ, ಓಂ ಓಂ ಓಂ ಓಂ ಓಂ ಓಂ ಓಂ ಓಂ ಓಂ ಓಂ ಏಂ ಏಂ ಏಂ ಏಂ ಏಂ ಎಂಬ ಮಹಾನಾದದೊಳಗೆ ಆ ಕಾಲನ ಬಾಧೆ ಹೋಗಿ, ಭವದುಃಖ ಹಿಂಗಿ, ಚಿತ್ತಚಿನ್ಮಯ ಸವಿಗೊಂಡು ನಿತ್ಯ ತೃಪ್ತನಾಗಿ, ನಿಜಲೀಲಾನುಭವದ ಶಬ್ದಕ್ಕೆ ಮುಗ್ಧನಾಗಿ, ಆತ್ಮಜ್ಞಾನದ ನಲಿಗಿನೊಳಗೆ ಲೋಲಗೊಂಡು, ಎಚ್ಚರಡಗಿ ಅಚ್ಚಸುಖದಲ್ಲಿ ಸಮರಸವಾಗಿರಲು, ಸಾವು ಬಂದು ಸಾವು ಸತ್ತು ಸಾವು ಸಾವಾಗಲು ಆ ಶರಣನ ಅಂಗ, ಮನ, ಭಾವ, ಆತ್ಮಸಂಗವೊಂದಾಗಿರೆ ಶ್ವಾಸ ಸುಳುಹುಗಳೆಲ್ಲಾ ನಿಂದು, ಚಿತ್ತ ಸತ್ತು ಸ್ವಸ್ಥವಾಗಲು, ನಿಜಶರಣನ ಅರುವು ಲಿಂಗದಲ್ಲಿ ಪರವಶರಾಗಿಹರೆಂಬುದು ಬಲ್ಲರಲ್ಲದೆ ಅರುವು ಮರೆಗೊಂಡಿರ್ಪ ನಿರ್ಬೈಲ ಆರೂ ಅರಿಯರೋ. ಆ ಶರಣ ತನ್ನರುವು ತಾನರಿಯ, ಸತ್ತ ಸುದ್ದಿ ಸತ್ತವ ಅರಿಯ, ಬದುಕಿದವ ಬಲ್ಲ. ಇದೇ ನಿಜಮುಕ್ತಿ ; ಇದನರಿಯದೆ, ತತ್ವವನೋದಿ ಗಾಳಿಗೊದರುವ ಒಡಕುಮಡಕಿಯ ಸ್ವರವ ಕಡಿಮಿಯಾದ ನಾದವನು ಆಲಿಸಿ, ನಾಹಂಬ್ರಹ್ಮವ ನುಡಿದು, ಕೋಹಂಬ್ರಹ್ಮವ ಬೆರೆತು, ಮುಂದೆ ಸೋಹಂ ಬ್ರಹ್ಮವ ಹುಡುಕದೆ, ದಾಸೋಹಂಬ್ರಹ್ಮವ ಕೂಡದೆ, ನಮಗೆ ಸಾವು ಇಲ್ಲಾ, ನಮ್ಮ ದೇಹ ಬೈಲು ಮಾಡುವೆವೆಂದು ಅದು ತಪ್ಪಲಿಕ್ಕೆ ಪಂಚತತ್ವದೇಹವು, ಪಂಚತತ್ವಕ್ಕೆ ಕೂಡಿಸುವೆವು ಎಂಬುವರು. ಅದು ಹಾಂಗಿರಲು, ಆ ದೇಹ ಬಯಲುವಾದರೇನು ? ಆ ಬಯಲಿಗೆ ಸಾವು ಇಲ್ಲವು. ತಾವು ಮಾಡಿದರೆ ಆಗುವುದೆ ? ತಾನೇ ಆಗಲರಿಯದು. ಎಷ್ಟು ನಿಜ ತಿಳಿದರೇನೋ ? ಅಷ್ಟು ತಾವಾಗದೇ, ಭ್ರಷ್ಟರಾಗಿ ಹೋದರೋ ನಿರುಪಮ ನಿರಾಳ ಮಹತ್ಪ್ರಭು ಮಹಾಂತಯೋಗಿ.
--------------
ಮಡಿವಾಳಪ್ಪ / ಕಡಕೋಳ ಮಡಿವಾಳಪ್ಪ
ಆ ಪರಶಿವನ ಮಾಯಾಸ್ವರೂಪವಾದ ಈ ಲೋಕದ ಜನರಿಗೆ ಪೂರ್ವಪುಣ್ಯವೊದಗಿ, ಸಂಸಾರ ಹೇಯವಾಗಿ, ಗುರುಕಾರುಣ್ಯವ ಪಡೆದು, ಆತ್ಮಜ್ಞಾನ ತಿಳಿಯಲಿಕ್ಕೆ, ಮನಗೊಟ್ಟು, ತತ್ವವ ಶೋಧಿಸಿ, ಪುರಾತನ ವಚನ ಹಾಡಿಕೊಂಡು ಅನುಭವಿಯಾಗಿ, ನಾನೇ ಅನುಭಾವಿ ನಾನೇ ಪ್ರಭು, ನಾನೇ ಪರಬ್ರಹ್ಮವ ಬಲ್ಲ ಪರಮಜ್ಞಾನಿಯೆಂದು, ಬಸವಾದಿ ಪೂರ್ವಪ್ರಮಥರ ಪುರಾತರ ಮಹಾಗಣಂಗಳ ಜರಿದು, ಈ ಭುವನದಲ್ಲಿ ಇನ್ನಾ ್ಯರು ನಿಜವನರಿತವರಿಲ್ಲೆಂದು ಅಹಂಕರಿಸಿ, ನಾವು ಮಹಾಜ್ಞಾನಿಗಳು, ನಾವು ಕೇವಲ ಶಿವಾಂಶಿಕರು, ನಮ್ಮನ್ನಾರು ಅರಿಯರು, ನಮ್ಮ ಬಲ್ಲವರು ಪುಣ್ಯವಂತರು, ನಮ್ಮನ್ನರಿಯದವರು ಪಾಪಿಷ*ರು. ನಾವು ಮಹತ್ವ ಉಳ್ಳವರು, ನಾವು ಮಕ್ಕಳ ಕೊಡುವೆವು, ರೋಗ ಕಳೆಯುವೆವು, ಬ್ರಹ್ಮಹತ್ಯಾದಿ ಪಿಶಾಚಿಯ ಸೋಂಕು ಬಿಡಿಸುವೆವು ಎಂದು ವಿಭೂತಿ ಮಂತ್ರಿಸಿಕೊಟ್ಟು, ಅವರ ಮನೆಯಲ್ಲಿ ಶಿವಪೂಜೆಯ ಪಸಾರವನಿಳಿಯಿಟ್ಟು, ಆ ರೋಗದವರನ್ನು ಮುಂದೆ ಕೂಡ್ರಿಸಿಕೊಂಡು, ತಾ ಕೂತು ಕಣ್ಣು ಮುಚ್ಚಿ, ಒಳಗೆ ಬೆಳಗವ ಕಂಡು, ಕಣ್ದೆರೆದು, ಬಿರಿಗಣ್ಣಿನಿಂದ ನೋಡ್ತ ಹಡ್ತ ಹುಡ್ತ ಮಾಡಿ ಪರಿಣಾಮವಾಗಲೆಂದು ಹೇಳಲು, ಅದು ರಿಣಾ ತೀರಿಹೋದರೆ, ನಮ್ಮ ಮಹತ್ವ ಎಂಥಾದ್ದು, ಹಿಂದೆ ಇಂಥಾ ಮಹತ್ವ ಬಳಹ ಮಾಡೀವಿಯೆಂದು ಅಲ್ಲಲ್ಲಿ ಹೆಸರು ಹೇಳಿಕೊಳ್ಳಬೇಕು. ಅದು ಹೋಗದಿದ್ದರೆ- ಇವರ ವಿಶ್ವಾಸ ಘಟ್ಟಿಲ್ಲೆಂದು, ಏನರೆ ನೆವ ಕೊಳ್ಳಬೇಕು. ಕೊಟ್ಟರೆ ಹೊಗಳಬೇಕು, ಕೊಡದಿದ್ದರೆ ಬೊಗಳಬೇಕು. ಅವರಿಂದ ಆ ಹಣವು ತನಗೆ ಬಾರದಿದ್ದರೆ ಅವರ ಅರ್ಥವ ಕಳೆಯಬೇಕೆಂಬ ಯೋಚನೆಬೇಕು. ಅಥವಾ ಫಣ್ಯಾಚಾರದಲ್ಲಿ ಅವರಿಂದ ಅರ್ಥವ ಸೆಳೆತಂದು ಹಿಂದೆ ತಾ ಬಿಟ್ಟು ಪೂರ್ವಪ್ರಪಂಚದವರಿಗೆ ಕೊಟ್ಟು ಈ ವಿಷಯಾತುರಕ್ಕೆ ವಾಯು ತಪ್ಪಿ ನಡೆದು ಇದು ಪ್ರಭುವಿನಪ್ಪಣೆಯೆಂದು ಹಾಡಿದ್ದೇ ಹಾಡುವ ಕಿಸಬಾಯಿದಾಸನ್ಹಾಂಗೆ ಹಾದಿಡ್ದೇ ಹಾಡಿಕೊಳ್ಳುತ್ತ, ಕ್ರೀಯ ನಿಃಕ್ರಿಯವಾಗಿ ಸತ್ತ ಕತ್ತಿಯ ಎಲವು ತಂದು ತಿಪ್ಪಿಯಲ್ಲಿ ಬಚ್ಚಿಟ್ಟು ಸುತ್ತುವ ತಲೆಹುಳುಕ ಹುಚ್ಚುನಾಯಿಯಂತೆ, ಉಚ್ಚಿಯಾ ಪುಚ್ಚಿಗೆ ಮೆಚ್ಚನಿಟ್ಟ ನಿಚ್ಚ ಕಚ್ಚಿಗಡಕರಿಗೆ ತಮ್ಮ ನಿಜದೆಚ್ಚರ ಇನ್ನೆಲ್ಲಿಹದೋ ? ನಿರುಪಮ ನಿರಾಳ ಮಹತ್ಪ್ರಭು ಮಹಾಂತಯೋಗಿ.
--------------
ಮಡಿವಾಳಪ್ಪ / ಕಡಕೋಳ ಮಡಿವಾಳಪ್ಪ
ಆ ಪರಶಿವನ ಅಷ್ಟಾಂಗದಿಂದಾದ ಬ್ರಹ್ಮಾಂಡದ ಸ್ಥಿರ ಚರ ಪ್ರಾಣಿಗಳ ಲಯವ ನೋಡಿ ಚಿಂತೆಯೊಳಗಾಗಿ, ಕಂತುಹರನ ಧ್ಯಾನವ ಮಾಡಲು, ಆ ಹರ ಗುರುರೂಪವ ತಾಳ್ದು ಬಂದು, ತನ್ನ ಚಿಂತಿಸಿದ ಸುಜ್ಞಾನಿಗಳಿಗೆ, ಮನವನೊಬ್ಬುಳಿಗೊಳಿಸುವುದಕ್ಕೆ ಕಾರಣವೆಂದು ಹೇಳಿದ ಷಣ್ಮುಖ, ಶಾಂಭವಿ, ಖೇಚರಿ, ಭೂಚರಿ, ಸಾಚರಿ, ಕುರಂಗ, ಪಾಲೋತಕ, ಹಠ, ಲಯ, ಲಂಬಿಕ, ಮೊದಲಾದ ಅನಂತ ಮುದ್ರೆಗಳ ಸಾಧಿಸಿ, ಆ ಮುದ್ರೆ ಸಾಧನದಲ್ಲಿ ಕಂಡ, ಮಾಯ, ಛಾಯ, ಅಭ್ರಛಾಯ, ಪುರುಷಛಾಯ, ಮಿಂಚಿನ ಛಾಯ, ಬಳ್ಳಿಮಿರುಪಿನ ಛಾಯ, ಆರು ವರ್ಣದ ಛಾಯ, ಮೃತ್ಯುವಿನ ಛಾಯ, ಜೀವ ಜಪ ಮರಣ ಚಿನ್ನ ಕನಸಸಂಭ್ರಮ, ಕುಂಡಲಿನೋಟ, ಘೋಷಲಂಪಟ, ಮಾನಸಪೂಜೆ, ಬೈಲವಾಣಿ, ಪಶ್ಚಿಮಕೋಣೆ, ಆತ್ಮಭೆಟ್ಟಿ, ಮಂತ್ರಪಾಠ, ಒಳಬೆಳಗು, ಹೊರಬೆಳಗು ಪರಿಪರಿಯ ಬೆರಗುಗಳ ತಿಳಿದು, ಇದೇ ನಿಜಬ್ರಹ್ಮವೆಂದು ಹೆಮ್ಮೆ ೈಸಿ, ಆಸೆವೊಡಿಯದೆ, ಕ್ಲೇಶ ಕಡಿಯದೆ, ಘಾಶಿಯಾಗಿ ಹೇಸಕಿಯೊಳಗೆ ಮುಳಿಗಿ ಮುಂದುಗಾಣದೇ ಹೋದರು ನಿರುಪಮ ನಿರಾಳ ಮಹತ್ಪ್ರಭು ಮಹಾಂತಯೋಗಿ.
--------------
ಮಡಿವಾಳಪ್ಪ / ಕಡಕೋಳ ಮಡಿವಾಳಪ್ಪ
ಆಗ ಆದುದು ತಾನೆ ಇಕೊ ಈಗ ಆದುದು ತಾನೆ ಕೂಗಿ ಹೇಳಿದುದು ತಾನೆ ತಲೆದೂಗಿ ಕೇಳುವುದು ತಾನೆ | ಪಲ್ಲ | ಬೀಜ ಬಿತ್ತಾಯಿತು ಆ ಬೀಜವೇ ವೃಕ್ಷವಾಯಿತು ಬೀಜ ಫಲವಾಯಿತು ಬೀಜ ಬೀಜವೇ ರಸವಾಯಿತು. ರಸವೆ ಊಟವಾಯಿತು ಆ ರಸವೇ ತಾಟಾಯಿತು ಆ ರಸವೇ ನೋಟಾಯಿತು ರಸವೇ ಕೂಟಾಯಿತು. ಕೂಟೇ ಹೆಣ್ಣಾಯಿತು ಆ ಕೂಟೇ ಗಂಡಾಯಿತು ಕೂಟೇ ಪಿಂಡಾಯಿತು ಆ ಕೂಟೇ ಆಶಾಯಿತು. ಆಶೆ ದೋಷವಾಯಿತು ಆಶೆ ಪಾಶವಾಯಿತು ಆ ಆಶೆ ಘಾಸ್ಯಾಯಿತು ಆಶೆ ಆಶೆ ನಾಶಾಯಿತು. ನಾಶ ನಾನಾಯಿತು ಆ ನಾಶ ನೀನಾಯಿತು ನಾಶ ತಾನಾಯಿತು ನಾಶ ನಾಶ ಮಹಾಂತಾಯಿತು.
--------------
ಮಡಿವಾಳಪ್ಪ / ಕಡಕೋಳ ಮಡಿವಾಳಪ್ಪ
ಆ ಪರಶಿವನ ಮೂಲಮಂತ್ರಸ್ವರೂಪವಾದ ಭುವನಬ್ರಹ್ಮಾಂಡದ, ಸಕಲಜೀವಿಗಳ ವಿಸ್ತಾರವ ಕಂಡು, ತೋರಿ ಅಡಗುವ ಪರಿಗೆ ಸಂಸಾರಮಿಥ್ಯವೆಂದು ಸಜ್ಜನಗುಣದಲ್ಲಿ ಕೂಡಿ, ಸತ್ಪುರುಷರ ಸಂಗವಮಾಡಿ, ಶಾಸ್ತ್ರಾಗಮ ಶಿವಪುರಾಣ, ಶಿವಾಚಾರದಲ್ಲಿ ಮನವಿಟ್ಟು ತತ್ ತ್ವಂ ಅಸಿಯೆಂಬೋ ವಾಕ್ಯಕ್ಕೆ ಚಿತ್ತವೆಳಸಿ ವಸ್ತು ತಿಳಿಯಬೇಕೆಂದು ತತ್ವಜ್ಞಾನಿಗಳ ಹುಡುಕುವ ಶ್ರುತಿಜ್ಞಾನಿಗಳಿಗೆ, ಆ ವಸ್ತುವೇ ಗುರುವಾಗಿ, ತತ್ವೋಪದೇಶವ ಹೇಳಿ, ತತ್ವ ಮಂತ್ರ ವಿವರವ ತಿಳಿಸಲು, ಆ ತತ್ವ ಮಂತ್ರ ವಿವರವ ತನ್ನೊಳಗೆ ಲಕ್ಷವಿಟ್ಟು ನೋಡೆ ಆತ್ಮಜ್ಞಾನ ಅನುಮಿಷವಾಯಿತ್ತು. ಆ ಆತ್ಮಜ್ಞಾನ ಅನುಮಿಷದೃಷ್ಟಿ, ಆ ಆತ್ಮಾನಾತ್ಮವ ಶೋಧಿಸಿತ್ತು. ಆ ಶೋಧನೆ ಮಹಾಜ್ಞಾನ ಬೆಳಗಲು, ಆ ಬೆಳಗಿನೊಳಗೆ ಮೂಲಪ್ರಣವದ ಒಡಲೊಳಗಿನ ಆರು ಆಕೃತಿಗಳೆ ಆರು ಬೀಜಪ್ರಣವಗಳು, ಆ ಆರು ಪ್ರಣವಗಳೇ ಆ ಪರಶಿವನ ಆರು ಮುಖಗಳು, ಆ ಆರು ಮುಖಗಳಿಗೆ ಆರು ತತ್ವಗಳು, ಆರಾರು ಮೂವತ್ತಾರುತತ್ವವು. ಮೂವತ್ತಾರುತತ್ವಗಳಿಗೆ ಬ್ರಹ್ಮಾಂಡ, ಆ ಬ್ರಹ್ಮಾಂಡವೇ ಹನ್ನೆರಡು ಭೂತ, ಹನ್ನೆರಡು ಭೂತಗಳೇ ಪಿಂಡಾಂಡ. ಆ ಪಿಂಡಾಂಡದಲ್ಲಿ ಹನ್ನೆರಡು ಜ್ಞಾನ, ಹನ್ನೆರಡು ಸ್ಥಾನ, ಹನ್ನೆರಡು ಚಕ್ರ, ಹನ್ನೆರಡು ಅಂಗ, ಹನ್ನೆರಡು ಲಿಂಗ, ಹನ್ನೆರಡು ಭಕ್ತಿ, ಹನ್ನೆರಡು ಶಕ್ತಿ, ಹನ್ನೆರಡು ಮಂತ್ರ, ಹನ್ನೆರಡು ಹಸ್ತ, ಹನ್ನೆರಡು ಮುಖ, ಹನ್ನೆರಡು ಪದಾರ್ಥ, ಹನ್ನೆರಡು ಪ್ರಸಾದ, ಹನ್ನೆರಡು ತೃಪ್ತಿ-ಇವು ಮೊದಲಾದ ಸತ್ಕರ್ಮದೊಳಾಗದ ಸರ್ವಸುಗುಣಗಳು, ಸರ್ವದುರ್ಗುಣಗಳು, ಸರ್ವವೂ ಮೂಲಪ್ರಣವವೆಂದು ತಿಳಿದು, ಸರ್ವವೂ ಮೂಲಪ್ರಣವವೇ ಶಿವ, ಆ ಮೂಲಪ್ರಣವವೇ ಅಷ್ಟಾವರಣ, ಆ ಮೂಲಪ್ರಣವವೇ ಸಕಲಪ್ರಾಣಿಗಳು, ಆ ಮೂಲಪ್ರಣವವೇ ನಾನು, ಸರ್ವವೂ ಮೂಲಪ್ರಣವವೆಂದು ಇಲ್ಲೇನು, ಅಲ್ಲೇನು, ಎಲ್ಲೇನು, ಹಿಂಗೇನು, ಹಾಂಗೇನು, ಹ್ಯಾಂಗೇನು, ಇದ್ದಂಗಿರು ಸಿದ್ಧೇಶನೆಂಬುವದ ತಿಳಿದು, ತಿಳಿಯದೇ ನರಕದ ಕೇರಿಗೆ ಕಿರಿಕುಲದ ಸೂಕರ ಹೋದಂತೆ, ಹಸಿಯ ತೊಗಲಿನ ವಸರುವ ತೂತಿನ ಹಳೇ ಘಾಯಿಯ ಬಿರಿಕಿನೊಳಗೆ, ಸರಕನೇ ಎದ್ದು ಜರಕನೇ ಜಾರಿ ಸಿಗಬಿದ್ದರೋ ನಿರುಪಮ ನಿರಾಳ ಮಹತ್ಪ್ರಭು ಮಹಾಂತಯೋಗಿ.
--------------
ಮಡಿವಾಳಪ್ಪ / ಕಡಕೋಳ ಮಡಿವಾಳಪ್ಪ
ಆಸೆ ಇಲ್ಲಾ, ನಿರಾಸೆ ಇಲ್ಲಾ, ಕ್ಲೇಶ ಇಲ್ಲಾ, ರೋಷವಿಲ್ಲಾ, ದ್ವೇಷವಿಲ್ಲಾ, ದೂಷಿಯಿಲ್ಲಾ-ಇವೂ ಏನೂ ಇಲ್ಲದೇ ತಾನಲ್ಲಾಗದೆ ಮೆಲ್ಲಮೆಲ್ಲನೆ ಸತ್ತು ಸತ್ತು ಹೋಯಿತು ಅನಂತಕಾಲ ಅನಂತಜನ್ಮ. ನಿರುಪಮ ನಿರಾಳ ಮಹತ್ಪ್ರಭು ಮಹಾಂತಯೋಗಿ.
--------------
ಮಡಿವಾಳಪ್ಪ / ಕಡಕೋಳ ಮಡಿವಾಳಪ್ಪ
ಆ ಪರಶಿವನೇ ತಾನೇ ಆದ ಆತ್ಮನೋರ್ವಗೆ ಕರ್ಮ ಎರಡು, ಮೂರು ಗುಣ, ಕರಣ ನಾಲ್ಕು, ಇಂದ್ರಿಯ ಐದು, ವರ್ಗ ಆರು, ವ್ಯಸನ ಏಳು, ಮದ ಎಂಟು, ನಾಳ ಒಂಬತ್ತು, ವಾಯು ಹತ್ತು, ಎಪ್ಪತ್ತೆರಡು ಸಾವಿರ ನಾಡಿ, ಅರವತ್ತಾರುಕೋಟಿ ಗುಣ, ಆರುವರೆಕೋಟಿ ರೋಮ- ಇವು ಮೊದಲಾದ ಅನಂತ ತತ್ವಯುಕ್ತವೆನಿಸಿದ ತೊಂಬತ್ತಾರು ಅಂಗುಲ ದೇಹದೊಳಗೆ ನಿರ್ದೇಹಿಯಾಗಿ, ಕರ್ಮ ಎರಡರೊಳಗೆ ದುಷ್ಕರ್ಮಮಾಡುವದೆಂತೆನೆ : ಜಾರ ಚೋರ ಹುಸಿ ಹಾಸ್ಯ ಡಂಭಕ ಜೀವಹಿಂಸಾ ಪರಪೀಡಾ ಕ್ಷುದ್ರ ಧೂರ್ತ ಕ್ರೋಧಿ ವಿಕಾರಿ ಪರದ್ರವ್ಯಾಪಹಾರಕ ಅಹಂಕಾರ ಅಜ್ಞಾನ ಅನಾಚಾರ ಪಂಚಪಾತಕ ವಿಶ್ವಾಸಘಾತಕ ಇವು ಮೊದಲಾದ ಅನಂತ ದುರ್ಗುಣದಿಂದ ತನ್ನ ತಾ ಮರೆತು ತಾ ಮಾಡಿದ ದುಷ್ಕರ್ಮದಿಂದೆ ಪಾಪಹತ್ತಿ, ದುಃಖಗೊಂಡು ಯಮನೊಳಗಾಗಿ ನರಕ ಉಂಡು ಎಂಬತ್ತುನಾಲ್ಕುಲಕ್ಷ ಜೀವರಾಶಿಯೋನಿಯಲ್ಲಿ ಅನಂತಕಾಲ ತಿರುತಿರುಗಿ ಬಳಲುವದು. ಆ ಬಳಲುವ ದುಷ್ಕರ್ಮವೇ ಕಾಲೋಚಿತಕ್ಕೆ ಸತ್ಕರ್ಮವಾಯಿತು. ಅದು ಎಂತಾಯಿತೆಂದರೆ : ಚೋರರಿಗೆ ಪರದ್ರವ್ಯಾಪಹಾರ ವಿಯೋಗದಲ್ಲಿ, ದೇಗುಲ ದೀಪದಕುಡಿ ಕಡಿದಂತೆ : ಆ ಸತ್ಕರ್ಮ ಮಾಡುವದೆಂತೆನೆ : ದಯ, ಧರ್ಮ, ನಯ, ನೀತಿ ಶಾಂತಿ, ದಾಂತಿ, ಕ್ಷಮೆ, ದಮೆ, ಭಕ್ತಿ , ಜ್ಞಾನ, ವೈರಾಗ್ಯ, ನಿರಹಂಕಾರ, ನಿರಾಶ, ಅಷ್ಟಾಂಗಯೋಗ, ಅಷ್ಟವಿಧಾರ್ಚನೆ, ಅಷ್ಟಾವರಣನಿಷೆ* - ಇವು ಮೊದಲಾದ ಅನಂತ ಸುಗುಣದಿಂದೆ ಪುಣ್ಯವೊದಗಿ ಸುಖಗೊಂಡು ಇಂದ್ರನೊಳಗಾಗಿ ಸ್ವರ್ಗ ಅನುಭವಿಸಿ ಅಥವಾ ಬಹು ಸತ್ಕರ್ಮವಾದಡೆ ಸದಾಶಿವನ ಚೌಪದ ಬಹುಪದದೊಳಗಾಗಿ ಕೈಲಾಸಕ್ಕೆ ಹೋಗಿ ಸತ್ಕರ್ಮದಿಂದ ಒದಗಿದ ಪುಣ್ಯದ ಫಲವನ್ನು ಅನುಭವಿಸಿ ಮರಳಿ ಎಂಬತ್ನಾಲ್ಕುಲಕ್ಷ ಜೀವರಾಶಿ ಯೋನಿಯ ದ್ವಾರದಲ್ಲಿ ಅನಂತಕಾಲ ತಿರುತಿರುಗಿ ಅಷ್ಟಭೋಗಸುಖದೊಳಗೆ ತೊಳಲುವದು, ಆ ತೊಳಲುವ ಸತ್ಕರ್ಮವೇ ಕಾಲೋಚಿತಕ್ಕೆ ದುಷ್ಕರ್ಮವಾಗುವದು. ಅದೆಂತೆನೆ : ಶಿವಗಡ ಬಿದ್ದು ಗಂಧರ್ವ ಕರಿನಾಯಿ ಆದಂತೆ `ಅತಿದಾನಾದ್ ಬಲೇರ್ಬಂಧಃ' ಎಂಬ ನೀತಿ ಉಂಟಾಗಿ, ಇದಕ್ಕೆ ದುಷ್ಟಮಾರಿ ಚೌಡಾಪೂರ ವಿರೂಪಾಕ್ಷಿಗೆ ಜಂಗಮದಾಸೋಹದಲ್ಲಿ ಜಂಗಮದೋಷ ಘಟಿಸಿದಂತೆ. ಅದುಕಾರಣ ಸತ್ಕರ್ಮಕ್ಕೆ ಬೀಜ ದುಷ್ಕರ್ಮ, ದುಷ್ಕರ್ಮಕ್ಕೆ ಬೀಜ ಸತ್ಕರ್ಮ. ಹೀಗಾದ ಮೇಲೆ ಸತ್ಕರ್ಮವೇ ದುಷ್ಕರ್ಮ, ದುಷ್ಕರ್ಮವೇ ಸತ್ಕರ್ಮ, ಪಾಪವೇ ಪುಣ್ಯ ಪುಣ್ಯವೇ ಪಾಪ, ಸುಖವೇ ದುಃಖ ದುಃಖವೇ ಸುಖ, ಇವು ಎರಡರೊಳಗೆ ಹೆಚ್ಚು ಕಡಿಮೆ ಎಂಬುದೇನೋ ನಿರುಪಮ ನಿರಾಳ ಮಹತ್ಪ್ರಭು ಮಹಾಂತಯೋಗಿ.
--------------
ಮಡಿವಾಳಪ್ಪ / ಕಡಕೋಳ ಮಡಿವಾಳಪ್ಪ
ಆ ಪರಶಿವನ ನಿರ್ಬಯಲವೇ ಮಹಾಬಯಲು, ಚಿದ್ಬಯಲು, ಬಯಲು ಮೂರಾದರೂ ಒಂದೇ. ಚಿನ್ನಾದ ಚಿದ್ಬಿಂದು ಚಿತ್ಕಳೆ, ನಾದ, ಬಿಂದು, ಕಳೆ ಆರಾದರೂ ಒಂದೇ. ಆರು ಮೂರು ಒಂಬತ್ತಾದರೂ ಒಂದೇ. ಒಂದು ಒಂಬತ್ತಾಗಿ, ಆ ನಿರ್ಬಯಲು ತಾನೆ ಹಲವಾಗಿತ್ತು. ಈ ಹಲವಾದರೂ ನಿರ್ಬೈಲೊಂದೇ, ಒಂದೇ ಎಂದರೆ ಒಂದೂ ಇಲ್ಲಾ. ನಿರ್ಬೈಲಿಗೆ ನಾಮ ಉಂಟೇ ? ರೂಪ ಉಂಟೇ ? ಕ್ರೀಯ ಉಂಟೇ ? ನಿರ್ಬೈಲೇ ನಿರ್ಬೈಲೆಂಬುದು ಇದು ಎಲ್ಲಿ ಇದೇ ನಿರ್ಬೈಲು. ಮತ್ತೆ ತಾ ನಿರ್ಬೈಲ ರೂಪಾದರೂ, ಆ ರೂಪ ತಾ ನಿರ್ಬೈಲಲ್ಲವೇ ? ತಾ ಕೂಡಲಿಕ್ಕೆ ಠಾವು ಬ್ಯಾರುಂಟೇ ? ಗಂಧ ರುಚಿ ರೂಪ ಸ್ಪರ್ಶ ಶಬ್ದ ತೃಪ್ತಿ ಇವು ತನ್ನ ತಾನಲ್ಲವೇ ? ಇದ್ದದ್ದು ತಾನೇ ಇಲ್ಲದ್ದು ತಾನೇ, ಹ್ಯಾಂಗಾದರೂ ತಾನೇ ನಿರ್ಬೈಲು. ಇದನರಿಯದೇ ಪೂರ್ವಪುಣ್ಯದಿಂದೆ ಮಾನವ ಜನ್ಮವ ತಾಳಿ, ಅಜ್ಞಾನವಳಿದು ಸುಜ್ಞಾನಿಯಾಗಿ, ಸುಜ್ಞಾನದಿಂದ ಸಾಧುರ ಸಂಗವ ಮಾಡಿ, ಗುರುಕರುಣವ ಪಡೆದು ಲಿಂಗವ ಪೂಜಿಸಿ, ಜಂಗಮಾರಾಧನೆಯ ಮಾಡಿ, ಪಾದೋದಕ ಸಲ್ಲಿಸಿ, ಪ್ರಸಾದವನುಂಡು, ವಿಭೂತಿಯ ಧರಿಸಿ, ರುದ್ರಾಕ್ಷಿಯ ಶೃಂಗರಿಸಿ, ಮಂತ್ರವನೋದಿ, ಯಂತ್ರವ ಕಟ್ಟಿ, ತಂತ್ರವ ತಿಳಿದು, ಸ್ವತಂತ್ರಸಿದ್ಧಲಿಂಗನಾದ ಮೇಲೆ ತನ್ನೊಳಗೆ ತಾನೇ ವಿಚಾರಿಸಿ, ಮತ ಒಂದಾದ ಮತಿಜ್ಞಾನ, ಸ್ತುತಿ ನಿಂದ್ಯ ಒಂದಾದ ತತ್ವಜ್ಞಾನ, ಸರ್ವವೂ ಒಂದಾದ ಸಮ್ಯಜ್ಞಾನ, ಅಂಗ ಒಂದಾದ ತತ್ವಜ್ಞಾನ, ಆ ಪ್ರಾಣ ಒಂದಾದ ಆತ್ಮಜ್ಞಾನ, ಕತ್ತಲೆ ಬೆಳಗು ಒಂದಾದ ಮಹಾಜ್ಞಾನ, ನಿಸ್ಸೀಮವಾದ ಅಖಂಡಜ್ಞಾನ, ಶಬ್ದಮುಗ್ಧವಾದುದ್ದೇ ಸ್ವಯಂಭುಬ್ರಹ್ಮಜ್ಞಾನ, ಅರವಾದದ್ದು ಅರವು, ಮರವಾದದ್ದು ಮರವು. ಈ ಮರವಾದದ್ದು ಮರವಾಗದೆ ಮರವು ಮರಳಿ ಅರವಾಗಿ, ಎಚ್ಚರಗೊಂಡು ಇಚ್ಛೆ ಉಳಿದರೆ ಅದೇ ಭವಮರವು, ಮರವಾಗಿ ಮರವು ಮರವಾದರೆ, ಸಾವಿಗೆ ಸಾವಾಗಿ ಸಾವು ಸತ್ತಿತ್ತು. ಮರವಿನ ಮರವೇ ಸಾವಿನ ಸಾವು; ಸಾವೆಂಬುದೇ ಮಾಯೆ. ಮಾಯೆಯೆಂಬುದೇ ಮರಗಿ, ಮರಗಿಯೆಂಬುದೇ ದುರಗಿ, ದುರಗಿಯೆಂಬುದೇ ಶಕ್ತಿ , ಶಕ್ತಿಯೆಂಬುದೇ ಅಂಗ, ಅಂಗವೆಂಬುದೇ ಲಿಂಗ, ಲಿಂಗವೆಂಬುದೇ ಮನ, ಮನವೆಂಬುದೇ ಘನ, ಘನವೆಂಬುದೇ ಗುರು, ಗುರುವೆಂಬುದೇ ಪರ, ಪರವೆಂಬುದೇ ತಾನು, ತಾನುಯೆಂಬುದೇ ಬೈಲು, ಬೈಲೆಂಬುದೇ ಮುಕ್ತಿ, ಮುಕ್ತಿಯೆಂಬುದೇ ಏನೋ ಏನೋ ಎಂಬುದೇ ಮಾತು, ಮಾತುಯೆಂಬುದೇ ವಚನ, ವಚನಯೆಂಬುದೇ ಅಕ್ಷರ, ಅಕ್ಷರಯೆಂಬುದೇ ಮಂತ್ರ, ಮಂತ್ರಯೆಂಬುದೇ ಪ್ರಣವ, ಪ್ರಣವಯೆಂಬುದೇ ನಾದ, ನಾದಯೆಂಬುದೇನಾದುದೇ ಹೇಳಲಿಕ್ಕೆ ನಿರ್ಬೈಲು. ನಿರ್ಬೈಲೇ ಸುಳ್ಳು, ಈ ಸುಳ್ಳು ಖರೇ ಮಾಡದೆ ಹರಿ ಅಜ ಇಂದ್ರಾದಿ ಮನು ಮುನಿ ನರ ನಾಗ ಸುರ ಸಿದ್ಧ ಸಾಧ್ಯರು, ರುದ್ರ ಈಶ್ವರ ಸದಾಶಿವ ಮಹಾದೇವರು ಮತ್ತೆ ಮಾದೇವರು, ಅಷ್ಟಾಂಗಯೋಗಿಗಳು, ಅಷ್ಟಾವರಣ ನಿಷೆ*ಯುಳ್ಳವರು, ಮಹಾನುಭಾವಿಗಳು, ನಿಜಜ್ಞಾನಿಗಳು, ಮಹಾ ಅರವಿಗಳು, ಸುಳ್ಳು ಸುಳ್ಳು ಮಾಡಿ, ಸುಳ್ಳು ಬ್ಯಾರೆ, ಖರೆಬ್ಯಾರೆ, ಬ್ರಹ್ಮವು ಬ್ಯಾರೆ, ಹಮ್ಮು ಬ್ಯಾರೆ, ಬ್ರಹ್ಮಾಂಡ ಬ್ಯಾರೆ, ಪಿಂಡಾಂಡ ಬ್ಯಾರೆ, ಕಾಯ ಬ್ಯಾರೆ, ಕರಣ ಬ್ಯಾರೆ, ಆತ್ಮ ಬ್ಯಾರೆ, ಪರಮಾತ್ಮ ಬ್ಯಾರೆ, ಭವ ಬ್ಯಾರೆ, ಶಿವ ಬ್ಯಾರೆ, ಬೆಳಗು ಬ್ಯಾರೆ, ಕತ್ತಲು ಬ್ಯಾರೆ, ಪುಣ್ಯ ಬ್ಯಾರೆ, ಪಾಪ ಬ್ಯಾರೆ, ಸತ್ಕರ್ಮ ಬ್ಯಾರೆ, ದುಷ್ಕರ್ಮ ಬ್ಯಾರೆ, ಅಜ್ಞಾನ ಬ್ಯಾರೆ, ಸುಜ್ಞಾನ ಬ್ಯಾರೆ, ಹೆಣ್ಣು ಬ್ಯಾರೆ, ಗಂಡು ಬ್ಯಾರೆ, ಸ್ವರ್ಗ ಬ್ಯಾರೆ, ನರಕ ಬ್ಯಾರೆ, ಸಾವು ಬ್ಯಾರೆ, ಜೀವ ಬ್ಯಾರೆ, ಗುರು ಬ್ಯಾರೆ, ಶಿಷ್ಯ ಬ್ಯಾರೆ, ಮಹಾಂತ ಬ್ಯಾರೆ, ಮಡಿವಾಳ ಬ್ಯಾರೆ, ಮೃತ್ಯು ಬ್ಯಾರೆ, ಮಾತು ಬ್ಯಾರೆ, ಭಕ್ತಿ ಬ್ಯಾರೆ, ಮುಕ್ತಿ ಬ್ಯಾರೆ, ನಾವು ಬ್ಯಾರೆ, ನೀವು ಬ್ಯಾರೆ, ತಾ ಬ್ಯಾರೆ ಬ್ಯಾರೆಯೆಂದು ತಾ ಬ್ಯಾರ್ಯಾಗಿ ಸುಳ್ಳು ಖರೇ ಮಾಡದ, ತುಪ್ಪ ಹಾಲುವ ಮಾಡದೇ ಹಾಲು ತುಪ್ಪವ ಮಾಡಿದಂತೆ ತಾವು ಸುಳ್ಳಾಗದೆ ಸುಳ್ಳು ಸುಳ್ಳೆಂದು ಸುಳ್ಳು ಜೊಳ್ಳಾದರೋ ನಿರುಪಮ ನಿರಾಳ ಮಹತ್ಪ್ರಭು ಮಹಾಂತಯೋಗಿ.
--------------
ಮಡಿವಾಳಪ್ಪ / ಕಡಕೋಳ ಮಡಿವಾಳಪ್ಪ
ಆ ಪರಶಿವನ ಗರ್ಭದಲ್ಲಿರ್ದ ಬ್ರಹ್ಮಾಂಡದೊಳಗೆ ಪಿಂಡಾಂಡವಾದ ಪುಣ್ಯಾತ್ಮರು, ಬಿಂದುರೂಪಾಗಿ ಬಂದ ಸೂತಕ ಕಂಡು ಸಂದೇಹಗೊಂಡು, ಚಂದವಳಿದು, ಹಿಂದೆ ಬಂದಾ ಯೋನಿಯ ಕಿಸುಕುಳ ಮೂತ್ರದಕುಣಿಗೆ ಬೀಳಬಾರದೆಂದು ಹೇಯ ಹುಟ್ಟಿ ಸ್ತ್ರೀ ಭೋಗವ ಬಿಟ್ಟು, ವೈರಾಗ್ಯ ತಲಿಗೇರಿ, ಅನ್ನ ವಸ್ತ್ರವ ಕಳೆದು ಊರೊಳಗಿರಬಾರದೆಂದು ದೇಶ ಸಂಚಾರ ಮಾಡಿ, ಕಾಶಿ, ಕೇದಾರ, ರಾಮೇಶ್ವರ, ಶ್ರೀಶೈಲ, ಉಳವಿ, ಹಂಪಿ, ಗೋಕರ್ಣ ಮೊದಲಾದ ಅನಂತ ತೀರ್ಥವ ಮಿಂದು, ಸಾಯಬಾರದ ಅಂಗಸಿದ್ಧಿ, ಅಲಗುನೋಯಿಸದ ಘುಟಿಕಾಸಿದ್ಧಿ, ಹೇಳಿದ್ದಾಗುವ ವಾಕ್ಯಸಿದ್ಧಿ, ಹೆಸರುಹೇಳುವ ಬೆನಕನಸಿದ್ಧಿ, ರೋಗಕಳೆಯುವ ಮೂಲಿಕಿಸಿದ್ಧಿ, ಬೆರಗುಮಾಡುವ ಬೇತಾಳಸಿದ್ಧಿ, ಅಗ್ನಿಸ್ತಂಭನ, ಜಲಸ್ತಂಭನ, ಗಗನಕ್ಕೆ ಹಾರುವ ಯೋಗಸಿದ್ಧಿ, ದೂರದೃಷ್ಟಿ, ದೂರಶ್ರವಣ, ಸರ್ವದೃಷ್ಟಿ, ಉಂಡೂಟ, ಕಂಡ ಕನಸು, ಮನೋಬಯಕೆ, ಹಿಂದಿನ ಖೂನ, ಕನಸಸಾಕ್ಷಿ, ಇಂದ್ರಜಾಲ, ಮಹೇಂದ್ರಜಾಲ, ಸುವರ್ಣಜನನ, ಬಂಗಾಳಿ, ಮರಣಯೋಗ, ಪರಕಾಯಪ್ರವೇಶ, ರಾಜಯೋಗ, ರಾಜವಶ, ಜನವಶ, ಸ್ತ್ರೀವಶ, ಭಸ್ಮಸಿದ್ಧಿ, ಅಂಜನಸಿದ್ಧಿ, ಮೋಹನ, ವೈರಿಸ್ತಂಭನ, ವಾಯುಸ್ತಂಭನ, ಭೂತ, ಪ್ರೇತ, ಪಿಶಾಚಿ, ಬ್ರಹ್ಮರಾಕ್ಷಸ, ಜಟ್ಟಿಂಗ, ಹಿರೋಡ್ಯಾ, ಯಲ್ಲಮ್ಮಾ, ಪೋತಮ್ಮಾ, ಚಂಡಿಚಾಮುಂಡ್ಯಾದಿಗಳ ಮಾತನಾಡಿಸುವ ಮಂತ್ರಸಿದ್ಧಿ, ಹುಲಿ, ಹಲ್ಲಿ, ಕತ್ತಿ, ನರಿ, ಕಾಗಿ, ಹಾಲ್ಹಕ್ಕಿ ಮೊದಲಾದ ಮೃಗಪಕ್ಷಿಯ ಮಾತು ತಿಳಿಯುವ ಯಂತ್ರತಂತ್ರಸಿದ್ಧಿ, ಮಲಮೂತ್ರವನು ಬಿಡದ ಅಂತರಪಚನ ಅದೃಶ್ಯ ಅನಂತ ಆಹಾರ ಜೀವಸ್ತಂಭನ, ದೇವ ಪ್ರತ್ಯಕ್ಷ ಸಂಜೀವನ, ಬಂಧವಿಮೋಚನ, ದೃಷ್ಟಿ ಆಗಮನ, ಇಷ್ಟದಾಯಕ ಮನೋಗಮನ ಮೊದಲಾದ ಅನಂತ ಸಿದ್ಧಿಗಳಿಗಾಶೆ ಮಾಡಿ ಮಣ್ಣುಗಾಣದೇ ಹೋದರು ಅನಂತರು. ಅದು ಅಂತಿರಲಿ, ಫಲಪದವಿ ಪಡೆವೆವೆಂದು ಹಳ್ಳ, ಕೊಳ್ಳ, ನದಿತೀರ, ಅಡವಿ ಅರಣ್ಯ ಗುಡ್ಡ ಗಿರಿ, ಗವಿ ವಟವೃಕ್ಷ, ಸಂಗಮ, ಮಠ ಮಾನ್ಯ ಮೊದಲಾದ ಸುಸ್ಥಳದಲ್ಲಿ ಕುಳಿತು ನಿದ್ರೆ ಆಹಾರ ತೊರೆದು, ಆಸನವ ಬಲಿದು, ಮೌನ ಮುದ್ರೆಯ ಹಿಡಿದು, ವಾತ, ಅಂಬು, ಪರ್ಣ, ಕಲ್ಲು, ಹಣ್ಣು, ಬೂದಿ, ಹುಲ್ಲಿನ ರಸ, ನೆಲ, ಬೇರು, ಗಡ್ಡಿ ಮೊದಲಾದ ಆಹಾರವ ಕೊಂಡು, ಮೈಗೆ ಹುತ್ತೇರಿ, ಜಡಿಯಲ್ಲಿ ಆಲವ ಬೆಳೆದು, ಗಡ್ಡದೊಳು ಗೀಜಗವು ಮನಿ ಮಾಡಿರಲು, ಮನವಳಿಯದೆ, ಘನವ ತಿಳಿಯದೆ, ತನುವ ಉಳಿಯದೆ, ಪಂಚೇಂದ್ರಿಯ ಮಿಂಚು ತೊಳಿಯದೆ, ಹಳೆಹಂಚಾದರೋ ನಿರುಪಮ ನಿರಾಳ ಮಹತ್ಪ್ರಭು ಮಹಾಂತಯೋಗಿ.
--------------
ಮಡಿವಾಳಪ್ಪ / ಕಡಕೋಳ ಮಡಿವಾಳಪ್ಪ
ಆ ಗುರುಶಿಷ್ಯರೆರಡು ಒಂದಾಗಿ ತಾನೇ ತಾನಾದ ವಿನೋದವೇನೆಂಬೆ ? ಮಹಾಂತ ಮಹಾಂತ ನೀನೆಂದರೆ ನೀನು ಇಂದಿನ ಮಹಾಂತನೇ ಅಲ್ಲಾ, ಅಂದಿನ ಮಹಂತ ನೀನು. ನೀನು ನಿರುಪಮ, ನಿರಾಳ, ನಿಷ್ಕಳ, ನಿರ್ಬೈಲು, ಮಹಾಬಯಲಾದ ಅಂದಿನ ಮಹಾಂತ ನೀನಲ್ಲವೆ ? ಅದು ನೀ ಹ್ಯಾಂಗ ಬಲ್ಲೆಯೆಂದರೆ : ನೀನು ನನಗೆ ತತ್ವೋಪದೇಶ ಹೇಳಿದಾತನೇ ? ಅಲ್ಲ. ಅಷ್ಟಾಂಗಯೋಗಂಗಳ ಹೇಳಿದಾತನೇ ? ಅಲ್ಲ. ಮುದ್ರೆಸಾಧನವ ಹೇಳಿದಾತನೇ ? ಅಲ್ಲ. ಹಠಯೋಗ ಲಯಯೋಗ ಲಂಬಿಕಾಯೋಗ ತಪಜಪ ಅದ್ವೈತಾದಿ ನಿತ್ಯನೇಮ ಪುಣ್ಯ ಸತ್ಕರ್ಮ ಮೊದಲಾದ ಇವು ಏನಾದರೂ ಎನಗೆ ಹೇಳಿದಾತನೇ ? ಅಲ್ಲ. ಇವು ಏನು ಹೇಳಲೊಲ್ಲದೆ ನನಗೊಂದು ಹೇಳಿದಿರಿ. ಅದ ಏನು ಹೇಳಿದಿರಿ ಅಂದರೆ, ನಿನ್ನ ನೀ ತಿಳಿದು ಹಾಡೆಂದು ಹೇಳಿದಿರಿ. ನೀನು ಹೇಳಿದುದಕ್ಕೆ ನಾನು ನನ್ನ ಒಬ್ಬುಳಿಯ ಮಾಡಿ ಏಕಚಿತ್ತಾಗಿ ಹೊರ ಆಸೆ ಬಿಟ್ಟು ಒಳನೋಟವಿಟ್ಟು ಹಸಿವೆ ತೃಷೆಗಳಂ ಸುಟ್ಟು ನನ್ನನ್ನೇ ನಾ ಕೆಟ್ಟು ರತಿ ನಿನ್ನೊಳಗಿಟ್ಟು ಆತ್ಮಜ್ಞಾನ ಅಳವಟ್ಟು, ಅಹಂಬ್ರಹ್ಮವಂ ಬಿಟ್ಟು, ನೀ ಒಂದು ಮಾಡೆಂದರೆ ನಾ ಒಂಬತ್ತು ಮಾಡಿ ಹುಡುಕಲು, ಅಲ್ಲಿ ನಿನ್ನ ಬಲ್ಲಾದೆ, ನಿನ್ನ ಬಲ್ಲಲ್ಲಿ ಸರ್ವವೂ ಬಲ್ಲಾದೆ. ನನ್ನ ನಿನ್ನ ಬಲ್ಲಲ್ಲಿ ಸರ್ವವೂ ಬಲ್ಲಾದೆ. ಅದು ಹ್ಯಾಂಗ ಬಲ್ಲಿ ಅಂದರೆ, ಮಾತಿಲೆ ಬಲ್ಲಲ್ಲಿ ನಿನ್ನ ವಾರ್ತಿ ಕೇಳಿ ಬಲ್ಲೆ, ನಿನ್ನ ಸನ್ನಿಧಿಗೆ ಹೋಗಿ ಬಲ್ಲೆ, ನಿನ್ನ ಕಂಡು ಬಲ್ಲೆ, ನಿನ್ನ ಕೂಡಿ ಬಲ್ಲೆ, ನಿನ್ನ ಸದ್ವಾಸನೆಗೊಂಡು ಬಲ್ಲೆ, ನಿನ್ನ ಸ್ನೇಹವ ಮಾಡಿ ಬಲ್ಲೆ, ನಿನ್ನ ಕೂಡುಂಡು ಬಲ್ಲೆ, ನಿನ್ನ ಸಮರಸಗೂಡಿ ಬಲ್ಲೆ, ನಿನ್ನ ಕೂಡಿದ ಪರಮಸುಖ ಪರಮ ಉಪಕಾರಕ್ಕೆ ಹೇಳಬಲ್ಲೆ, ವಿಸ್ತಾರವಾಗಿ ನಿನ್ನ ಹಾಡಿ ಬಲ್ಲೆ, ಒಂದೆ ಮಾಡಬಲ್ಲಲ್ಲಿ ಒಂಬತ್ತ ಮಾಡಬಲ್ಲೆ, ಈ ಒಂಬತ್ತುಮಾಡಿ ಬಲ್ಲಲ್ಲಿ ನಾ ಮೊದಲಾದ ಸರ್ವವು ನೀನೆಂಬುದು ಬಲ್ಲೆ. ಇನ್ನು ಎನ್ನ ಪ್ರಾಣ, ಮನ, ದೇಹ, ಭಾವ, ಅರವು, ಮನವು ನನ್ನ ಸರ್ವವು ನೀನಾದ ಮ್ಯಾಲೆ ನನಗೇನುಂಟು ? ಮತ್ರ್ಯಲೋಕದ ಮಹಾಗಣಂಗಳು, ಮಹಾನುಭಾವಿಗಳು, ನಿಜಜ್ಞಾನಿಗಳು, ಮಹಾ ಅರವಿಗಳು, ಎನಗೊಂದು ಹೆಸರಿಟ್ಟಿದ್ದರು. ಅದು ಹೆಸರು ನಿನಗೆ ಆಯಿತು. ಅದೇನು ಹೆಸರೆಂದರೆ ? ಸರ್ವವು ನೀನಾದಮ್ಯಾಲೆ, ಸತ್ಕರ್ಮ ದುಷ್ಕರ್ಮ ಎರಡು ನೀನೇ ಆದಿ. ನಾನು ಇನ್ನೇನು ಮಾಡಲಿ ಎಂದು ಆವ ಕರ್ಮವಿಲ್ಲದೆ ಸುಮ್ಮನೆ ಇರುತಿರಲು, ಅದ ಕಂಡು ಹೆಸರಿಟ್ಟಿದ್ದರು. ಈತ ಸತ್ಕರ್ಮಿಯೆಂಬುವೆ ಸತ್ಕರ್ಮಿ ಅಲ್ಲಾ, ಈತಗೆ ನಾವು ದುಷ್ಕರ್ಮಿಯೆಂಬುವೆ ದುಷ್ಕರ್ಮಿ ಅಲ್ಲಾ, ಪಾಪಿಯೆಂಬುವೆ ಪಾಪಿ ಅಲ್ಲಾ, ಪುಣ್ಯನೆಂಬುವೆ ಪುಣ್ಯನಲ್ಲಾ, ಆಸೆ ಅಲ್ಲಾ ನಿರಾಸೆ ಅಲ್ಲಾ, ಅಜ್ಞಾನಿ ಅಲ್ಲಾ ಸುಜ್ಞಾನಿ ಅಲ್ಲಾ, ಕಾಮಿ ಅಲ್ಲಾ ನಿಷ್ಕಾಮಿ ಅಲ್ಲಾ, ಕ್ರೋಧಿ ಅಲ್ಲಾ ನಿಷ್ಕ್ರೋಧಿ ಅಲ್ಲಾ, ಲೋಭಿ ಅಲ್ಲಾ ನಿರ್ಲೋಭಿ ಅಲ್ಲಾ, ಮೋಹಿ ಅಲ್ಲಾ ನಿರ್ಮೋಹಿ ಅಲ್ಲಾ, ಅಹಂಕಾರಿ ಅಲ್ಲಾ ನಿರಹಂಕಾರಿ ಅಲ್ಲಾ, ಮತ್ಸರಿ ಅಲ್ಲಾ ಮತ್ಸರರಹಿತನೇ ಅಲ್ಲಾ. ಯೋಗಿಯೇ ಅಲ್ಲಾ ಭೋಗಿಯೆ ಅಲ್ಲಾ. ತ್ಯಾಗಿಯೇ ಅಲ್ಲಾ ರಾಗಿಯೇ ಅಲ್ಲಾ, ಸುಖಿಯೇ ಅಲ್ಲಾ ದುಃಖಿಯೆ ಅಲ್ಲಾ, ಕ್ರಿಯಯುಕ್ತನೇ ಅಲ್ಲಾ ಕ್ರಿಯಾಬಾಹ್ಯನೇ ಅಲ್ಲಾ, ಭವಿಯೇ ಅಲ್ಲಾ ಭಕ್ತನೇ ಅಲ್ಲಾ, ಶಿವನೇ ಅಲ್ಲಾ ಜೀವನೇ ಅಲ್ಲಾ. ಅರುವೇ ಅಲ್ಲಾ ಮರವೆಯೇ ಅಲ್ಲಾ, ಸತ್ತವನೇ ಅಲ್ಲಾ ಬದುಕಿದವನೇ ಅಲ್ಲಾ, ಊರವನೇ ಅಲ್ಲಾ ಅಡವಿಯವನೇ ಅಲ್ಲಾ, ಗುರುವೇ ಅಲ್ಲಾ ಶಿಷ್ಯನೇ ಅಲ್ಲಾ, ಶಂಕರನೆ ಅಲ್ಲಾ ಕಿಂಕರನೇ ಅಲ್ಲಾ, ಹೇಳುವವನೇ ಅಲ್ಲಾ ಕೇಳುವವನೇ ಅಲ್ಲಾ, ಮೂಕನೇ ಅಲ್ಲಾ ಮಾತಾಡುವವನೇ ಅಲ್ಲಾ, ಹೆಣ್ಣೆ ಅಲ್ಲಾ ಗಂಡೇ ಅಲ್ಲಾ, ನಪುಂಸಕನೇ ಅಲ್ಲಾ ಅಂತರಪಿಶಾಚಿಯೇ ಅಲ್ಲಾ, ವಿಷಯಾತುರಿಯೇ ಅಲ್ಲಾ ವಿರಕ್ತನೇ ಅಲ್ಲ, ಇಹಲೋಕ ಇಚ್ಛಿಯೇ ಅಲ್ಲಾ ಪರಲೋಕ ಬಯಕಿಯೇ ಅಲ್ಲಾ. ಅದು ಎಂಬುವೆ ಅದು ಅಲ್ಲ, ಇದು ಎಂಬುವೆ ಇದು ಅಲ್ಲ. ಹಾಂಗೂ ಅಲ್ಲ ಹೀಂಗೂ ಅಲ್ಲ, ಅಂತೂ ಅಲ್ಲಾ ಇಂತೂ ಅಲ್ಲಾ, ಏನೂ ಅಲ್ಲಾ ಅಲ್ಲಾ ಅಲ್ಲಾ ಎಂದು ಹೆಸರಿಟ್ಟಿದ್ದರು ಎನಗೆ. ಇದು ಹೆಸರು ನಿನಗೆ ಆಯಿತು. ಅದೆಂತೆಂದೊಡೆ : ಅಲ್ಲಮಪ್ರಭು ಎಂಬುವ ನಾಮವು ನಿನಗೆ ಆಯಿತಲ್ಲದೆ ನನಗೆಲ್ಲಿಹದು ? ಅದು ಕಾರಣ ನನಗೆ ನಾಮವಿಲ್ಲಾ ರೂಪವಿಲ್ಲಾ ಕ್ರೀಯವಿಲ್ಲಾ ಬಯಕೆಯಿಲ್ಲಾ ಭವವಿಲ್ಲಾ ಆವುದೂ ಇಲ್ಲಾ. ಅದೇಕೆ ನೀ ಅಲ್ಲಾ ನಾ ಇಲ್ಲಾ ನಿರುಪಮ ನಿರಾಳ ಮಹತ್ಪ್ರಭು ಮಹಾಂತಯೋಗಿ.
--------------
ಮಡಿವಾಳಪ್ಪ / ಕಡಕೋಳ ಮಡಿವಾಳಪ್ಪ
ಆ ಪರಶಿವ ತಾನೇ ತಾನಾದ, ಲೀಲಾವೇಷದಲ್ಲಿ ಮೇಲಾದ. ತಾನೇ ಶಿವ, ನಾನೇ ಶಿಷ್ಯ, ನೀನೇ ಗುರುವು, ಏನು ಮುಕ್ತಿ ? ಈ ಚಾಪಲ್ಯದೊಳಗೆ ನೀ ಹೇಳಿದ್ಹಾಂಗೆ ನಾ ಕೇಳಿದೆನಾಗಿ ಒಂದೇ ಒಂದೆಂಬೋ ನಿಜಜ್ಞಾನ ಸಾಧಿಸುತ್ತ, ಆ ನಿಜಜ್ಞಾನದಿಂದೆ ನೋಡಲು, ಆವರ್ತದಿ ಬೀಜಮಧ್ಯ ಸಾವು ಅಂತ್ಯವಾಗಿ, ಸರ್ವವು ಸರ್ವಮಯವೆನಿಸಿತ್ತು. ಮತ್ತೆ ಕಾಮ ಮನ್ಮಥನಲ್ಲಿ, ಕ್ರೋಧ ಯಮನಲ್ಲಿ, ಲೋಭ ಕುಬೇರನಲ್ಲಿ, ಮೋಹ ಇಂದ್ರನಲ್ಲಿ, ಮದ ಬ್ರಹ್ಮನಲ್ಲಿ, ಮತ್ಸರ ವರುಣನಲ್ಲಿ. ಮತ್ತೆ ಭಕ್ತಿ ಬಸವಣ್ಣನಲ್ಲಿ, ವೈರಾಗ್ಯ ಮಡಿವಾಳನಲ್ಲಿ, ಶಾಂತಿ ಮರುಳಶಂಕರದೇವರಲ್ಲಿ, ನಿಜ ಅಜಗಣ್ಣನಲ್ಲಿ, ಜ್ಞಾನ ಚೆನ್ನಬಸವಣ್ಣನಲ್ಲಿ ; ಅರುಹು ಪ್ರಭುವಿನಲ್ಲಿ, ಕುರುಹು ಗೊಲ್ಲಾಳನಲ್ಲಿ. ಮತ್ತೆ ಸುಖ ಸ್ವರ್ಗದಲ್ಲಿ, ದುಃಖ ನರಕದಲ್ಲಿ, ಪುಣ್ಯ ಸತ್ಕರ್ಮದಲ್ಲಿ, ಪಾಪ ದುಷ್ಕರ್ಮದಲ್ಲಿ, ಜೀವಾತ್ಮ ಪರಮಾತ್ಮನಲ್ಲಿ, ಪರಮಾತ್ಮ ಮೊದಲಲ್ಲೆ. ಮತ್ತೆ ಹಲವು ಮಲದಲ್ಲಿ ನಾ ಶಿಷ್ಯನಲ್ಲೇ, ನೀ ಗುರುವಿನಲ್ಲೇ, ತಾ ಶಿವನಲ್ಲೇ, ಮುಕ್ತಿಯಲ್ಲೇ, ಅಲ್ಲೇನೋ, ಇಲ್ಲೇನೋ ಎಲ್ಲೇನೋ ಎಂತೇನೋ ? ನಾನೇನೋ ನೀನೇನೋ, ತಾನೇನೋ ಏನೇನೋ ? ಇದೇ ನಿಜವೆಂಬ ಅರುವು ಅಡಗಿದುದು ಬೆರಗು. ಈ ಬೆರಗು ಹೋದುದೇ ನಿಬ್ಬೆರಗು. ನಿಬ್ಬೆರಗು ಎಂಬುದೇ ಬಯಲು ; ಆ ಬಯಲು ಬಯಲಾದದ್ದೇ ನಿರ್ಬಯಲು. ಇದಲ್ಲದೆ ನಿಜವು ತಿಳಿದಿದ್ದು ; ಆ ನಿಜವು ತಾನಾಗದಿರ್ದರೆ ಆ ಮನುಜರು ಮುಂದೇನಾದರು ? ಗಜವಿಜಿಗೆ ಹೋತ್ಹೋಯಿತು, ಚದುರರಾದವರೆಲ್ಲಾ ಬದಿರಾಗಿ ಹೋದರು. ನಿರುಪಮ ನಿರಾಳ ಮಹತ್ಪ್ರಭು ಮಹಾಂತಯೋಗಿ.
--------------
ಮಡಿವಾಳಪ್ಪ / ಕಡಕೋಳ ಮಡಿವಾಳಪ್ಪ
ಆ ಪರಶಿವನೊಳಗಿರ್ದ ಜಗದಾತ್ಮನಲ್ಲಿ ತೋರುವ ಸತ್ಕರ್ಮ ದುಷ್ಕರ್ಮಕ್ಕೆ ಅಂಜಿ ಶಿವಧೋ ಶಿವಧೋ ಎಂದು ಮೊರೆಯಿಡಲು, ಶಿವ ಸಾಧುರಮುಖದಿಂದಲ್ಲಿ ಬಂದು ಗುರುವಿನ ಪಿಡಿಯೆಂದು ಹೇಳಲು, ಗುರುವೇ ಗುರುವೇ ಎಂದು ಮೊರೆಯಿಟ್ಟು ಗುರುವಿನ ಬಯಸುವ ಚಿದ್ಭ್ರಮೆ ಘಟ್ಟಿಗೊಂಡು ಮುಂದೆ ನಿಂದಿರಲು, ಆ ಮುಂದೆ ನಿಂತ ಗುರುವಿನ ಪ್ರಾರ್ಥಿಸಲು, ಆ ಶ್ರೀಗುರು ಆ ಶಿಷ್ಯನ ತನ್ನ ಕರುಣಜಲದಿಂದ ಮೈದೊಳೆದು, ವಿಭೂತಿಪಟ್ಟವ ಕಟ್ಟಿ, ರುದ್ರಾಕ್ಷಿಯ ಅಲಂಕರಿಸಿ, ಪಂಚಾಚಾರ್ಯರ ಸಾಕ್ಷಿಯಮಾಡಿ, ಶಿಕ್ಷಿಸಿ, ದೀಕ್ಷೆಯನೆಸಗಿ, ಮೋಕ್ಷದ ಹಣ್ಣಿನ ಬಯಕೆಗೆ ಬೀಜವಿದೆಯೆಂದು ಲಿಂಗವ ಕೊಟ್ಟು, ಜಂಗಮವ ಬೆರೆಸಿ, ಪಾದೋದಕವ ತರಳಿಸಿ, ಶಿವಪ್ರಸಾದವರಳಿಸಿ, ಮಂತ್ರಕಾಯವ ಮಾಡಿ, ಮುಕ್ತಿಪಕ್ವಗೈ ಎಂದು ಹೇಳಿ ಶಬ್ದಮುಗ್ಧವಾಗಲು, ಆ ಶಬ್ದಮುಗ್ಧವಾದ ಗುರುವಿನ ಹೃದಯವ ತಿಳಿಯದೇ, ತಾನ್ಯಾರೆಂಬುದನ್ನು ಅರಿಯದೆ, ಗುರುವಿನ ಹಾಡಿ ಹಾಡಿ, ವಿಭೂತಿಯ ಪೂಸಿ ಪೂಸಿ, ರುದ್ರಾಕ್ಷಿಯ ಧರಿಸಿ ಧರಿಸಿ, ಲಿಂಗವ ನೋಡಿ ನೋಡಿ, ಜಂಗಮದ ಆರಾಧನೆಯ ಮಾಡಿ ಮಾಡಿ, ಪಾದೋದಕವ ಕುಡಿದು ಕುಡಿದು, ಪ್ರಸಾದವನುಂಡುಂಡು, ಮಂತ್ರವನ್ನೋದೋದಿ, ಮಹತ್ವವ ಭ್ರಮಿಸಿ, ಮುಕ್ತಿಯ ಬಯಸಿ ಬಯಸಿ, ಕಿಸಬಾಯಿ ಆಗಿ ಆಗಿ ಹಸಗೆಟ್ಟು ಮುನ್ನಿಗಿಂ ಮಿಗಿಲಾಗಿ, ಭವಭವದಲ್ಲಿ ಮಸಿಮಣ್ಣಾದರೋ ನಿರುಪಮ ನಿರಾಳ ಮಹತ್ಪ್ರಭು ಮಹಾಂತಯೋಗಿ.
--------------
ಮಡಿವಾಳಪ್ಪ / ಕಡಕೋಳ ಮಡಿವಾಳಪ್ಪ