ಆಕಳ, ಕಳ್ಳರು ಕೊಂಡೊಯ್ದರೆನ್ನದಿರಿಂ ಭೋ, ನಿಮ್ಮ ಧರ್ಮ ! ಬೊಬ್ಬಿಡದಿರಿಂ ಭೋ, ನಿಮ್ಮ ಧರ್ಮ ! ಅರರಸಾಡದಿರಿಂ ಭೋ, ನಿಮ್ಮ ಧರ್ಮ ! ಅಲ್ಲಿ ಉಂಬಡೆ ಸಂಗ, ಇಲ್ಲಿ ಉಂಬಡೆ ಸಂಗ, ಕೂಡಲಸಂಗಮದೇವ ಏಕೋಭಾವ.
ಆರು ಇಲ್ಲದ ಅರಣ್ಯದಲ್ಲೊಂದು ಬೀಜವಿಲ್ಲದ ವೃಕ್ಷ ಪುಟ್ಟಿತ್ತು. ಆ ವೃಕ್ಷಕ್ಕೆ ಹೂವಿಲ್ಲದೆ ಕಾಯಿಯಾಯಿತ್ತು; ಕಾಯಿಯಿಲ್ಲದೆ ಹಣ್ಣಾಗಿತ್ತು. ಗಾಳಿಯಿಲ್ಲದೆ ಗಂಧವ ತೋರಿತ್ತು. ಆ ವಾಸನಕ್ಕೆ ಪಕ್ಕವಿದಲ್ಲದ ಹಕ್ಕಿ ಹಾರಿಹೋಗಿ ಹಣ್ಣನೆ ಕಚ್ಚಿತ್ತು. ಆ ಹಣ್ಣಿನ ರಸ ಭೂಮಿಯಮೇಲೆ ಸುರಿಯಲು ಭೂಮಿ ಬೆಂದು, ಸಮುದ್ರ ಬತ್ತಿ, ಅರಸನ ಮಾರ್ಬಲವೆಲ್ಲ ಪ್ರಳಯವಾಗಿ, ಅರಸು ಪ್ರಧಾನಿ ಸತ್ತು ಅರಸಿ ಅರಮನೆಯಲ್ಲಿ ಬಯಲಾಗಿ, ಎತ್ತ ಹೋದರೆಂದರಿಯಬಲ್ಲರೆ ಗುಹೇಶ್ವರಲಿಂಗವು ತಾನೆಯೆಂದನಯ್ಯ ನಿಮ್ಮ ಶರಣ ಕಾಡನೊಳಗಾದ ಶಂಕರಪ್ರಿಯ ಚನ್ನಕದಂಬಲಿಂಗ ನಿರ್ಮಾಯಪ್ರಭುವೆ.
ಆದಿಯಲ್ಲಿ ಒಬ್ಬ ದೇವನು ಮೂವರ ಕೂಡಿಕೊಂಡು ಆರು ಕೇರಿಗಳ ಪೊಕ್ಕು ನೋಡಲು ಆ ಕೇರಿಗಳಲ್ಲಿ ಆರು ಶಕ್ತಿಯರು ನಿಶಿಧ್ಯಾನವ ಮಾಡಿ ಒಳಹೊರಗೆ ಪರಿಪೂರ್ಣವಾಗಿಹರು ನೋಡಾ ಝೇಂಕಾರ ನಿಜಲಿಂಗಪ್ರಭುವೆ.