ವೇದ ವೇದಂಗಳೆಲ್ಲ ಶಿವನ ಹೊಗಳಿ ನಿರ್ಮಲವಾದವು ನೋಡಾ `ಓಂ ನಮಃ ಸೋಮಾಯ ಚ ರುದ್ರಾಯ ಚ' ಎಂದು ವೇದವಾಕ್ಯ ನೋಡಾ. `ನಮಸ್ತಾಮ್ರಾಯ ಚಾರುಣಾಯ ಚ' ಎಂದು ಪಂಡಿತಮುಖಪ್ರಸಿದ್ಧ ನೋಡಾ. `ನಮಃ ಶೃಂಗಾಯ ಚ ಪಶುಪತಯೇ ಚ' ಎಂದು ವೇದಾಧ್ಯಾಯಿಗಳರಿಕೆ ನೋಡಾ. `ನಮಃ ಶಿವಾಯ ಚ ಶಿವತರಾಯ ಚ' ಎಂದು ಕಪಿಲಸಿದ್ಧಮಲ್ಲಿಕಾರ್ಜುನನ ಪಂಚಮುಖದಲ್ಲಿ ನಿತ್ಯ ನಿತ್ಯ ಘೋಷ ನೋಡಾ, ಕೇದಾರಯ್ಯಾ.
ವೇದಂಗಳು ನಿಮ್ಮ ಭೇದಿಸಲರಿಯವು ನೋಡಾ ! ಆಗಮಂಗಳು ನಿಮ್ಮ ಹೊಗಳಲರಿಯವು ನೋಡಾ ! ಶ್ರುತಿತತಿಗಳು ನಿಮ್ಮ ಸ್ತುತಿಸಲರಿಯವು ನೋಡಾ ! ಶಾಸ್ತ್ರಂಗಳು ನಿಮ್ಮ ಸಾದ್ಥಿಸಲರಿಯವು ನೋಡಾ ಅಖಂಡೇಶ್ವರಾ.
ವೇದಶ್ರುತಿಯಿಂದ ವಸ್ತುವನರಿತೆಹೆನೆಂದಡೆ ಆ ವೇದವೆ ಹಾದಿಯೆ ವಸ್ತುವ ಕಾಬುದಕ್ಕೆ ? ಆ ವೇದ ಸರ್ವವು ಬ್ರಹ್ಮವೆಂದಲ್ಲಿ ವಸ್ತು ಎಲ್ಲಿ ಉಳಿಯಿತ್ತು ? ಆ ತೆರನ ತಿಳಿದು ವೇದವಾರನರಸಿತ್ತು ? ಶ್ರುತಿ ಯಾರ ಭೇದಿಸಿತ್ತು ? ಆ ಗುಣ ನಾದಬಿಂದುಕಳೆಯೊಳಗಾದಲ್ಲಿ ವಸ್ತುತತ್ವರೂಪಾಯಿತ್ತು. ಆ ಸ್ವರೂಪದ ಭೇದದಿಂದ ಪಂಚಭೌತಿಕದ ಗುಣದಿಂದ ಪಂಚವಿಂಶತಿತತ್ವಂಗಳೆಲ್ಲವೂ ಗೊತ್ತಾದವು. ನಾಲ್ಕು ವೇದ, ಹದಿನಾರು ಶಾಸ್ತ್ರ, ಇಪ್ಪತ್ತೆಂಟು ದಿವ್ಯಪುರಾಣಂಗಳಲ್ಲಿ ವೇದ್ಥಿಸಿ ಭೇದಿಸಿ ಕಂಡೆನೆಂಬಲ್ಲಿ ನಿಂದಿತ್ತು ನಿಜ ಸಂದೇಹಕ್ಕೆ ಒಳಗಾದುದಾಗಿ. ತರ್ಕಂಗಳಿಂದ ತರ್ಕಿಸಿ ನೋಡಿ ಮಿಕ್ಕಾದ ತತ್ವಂಗಳಲ್ಲಿ ಲಕ್ಷಿಸಿ ಪ್ರಮಾಣಿಸಿದಲ್ಲಿ ವಸ್ತು ಹಲವು ಕುಲವೆಂದು ಕಲ್ಪಿಸಿ ನುಡಿವಲ್ಲಿ ವಿಭೇದ ಪಕ್ಷವಲ್ಲದೆ ವಸ್ತು ಏಕರೂಪು. ಜಲ ಬಹುನೆಲಂಗಳಲ್ಲಿ ನಿಂದು ಒಲವರವಿಲ್ಲದೆ ಸಸಿ ವೃಕ್ಷಂಗಳ ಸಲಹುವಂತೆ ಸರ್ವಗುಣಸಂಪನ್ನನಾದೆಯಲ್ಲಾ ಪರಮಪ್ರಕಾಶ ಪರಂಜ್ಯೋತಿ ಪಂಚಬ್ರಹ್ಮಸ್ವರೂಪನಾದೆಯಲ್ಲಾ ಎನಗೆ ನೀನಾದೆಹೆನೆಂದು ಚನ್ನಬಸವಣ್ಣಪ್ರಿಯ ಭೋಗಮಲ್ಲಿಕಾರ್ಜುನಲಿಂಗಾ.
ವೇದಾಗಮಂಗಳು ಹೇಳಿದ ಹಾಗೆ ನಡೆವುದು, ಹೇಳಿದಂತೆ ನುಡಿವುದು, ಮೀರಿ ನಡೆಯಲಾಗದು, ಮೀರಿ ನುಡಿಯಲಾಗದು, ಮುಕ್ತಿಪದವೈದುವಾತ. ಅಪಹಾಸ್ಯಕ್ಕೆ ಬಾರದೆ ಆಚಾರಮಾರ್ಗದಲ್ಲಿರಬಲ್ಲಡೆ ಕೂಡಲಸಂಗಮದೇವನೀಗಲೆ ಒಲಿವ.
ವ್ಯಾಸನುಸುರ್ದ ಸ್ಕಂದಪುರಾಣದಲ್ಲಿಯ ಶ್ರೀಶೈಲಕಲ್ಪ ನೋಳ್ಪುದಯ್ಯಾ. ಅಲ್ಲಿ ಸಿದ್ಧಸಾಧಕರ ಸನ್ನಿದ್ಥಿಯಿಂದರಿಯಬಹುದಯ್ಯಾ. ಮಾಡಿದನೊಬ್ಬ ಪೂರ್ವದಲ್ಲಿ ಗೋರಕ್ಷ ಮಾಡಿದನೊಬ್ಬ ಮತ್ಸೆ ್ಯೀಂದ್ರನಾಥ, ಮಾಡಿದರೆಮ್ಮ ವಂಶದ ಶ್ರೀಗುರುಶಾಂತದೇವರು. ಇದು ಕಾರಣ, ಯೋಗದ ಭೇದ ಯೋಗಿಗಳಂತರಂಗದಿಂದರಿತಡೆ ಯೋಗಸಿದ್ಧಿ ಸತ್ಯ ಸತ್ಯ, ಶ್ರೀಗುರು ತೋಂಟದಸಿದ್ಧಲಿಂಗೇಶ್ವರ.
ವಾಸನೆ ಕಾರಣ ನೊಣವಿನ ಮಲ ಜೇನುತುಪ್ಪವೆಂದೆನಿಸಿತ್ತು, ಪರಿಮಳ ಕಾರಣ ಕೋಣನ ಮಾಂಸ ವಾಣಿಜ್ಯತೆ ಇಂಗು ಎನಿಸಿತ್ತಯ್ಯಾ, ಭಕ್ತಿ ಕಾರಣ ಎನ್ನಲುಳ್ಳ ಅವಗುಣ ಹಿಂಗಿತ್ತು ಕಾಣಾ, ಕೂಡಲಸಂಗಮದೇವಾ.