ಅಥವಾ

ಒಟ್ಟು 263 ಕಡೆಗಳಲ್ಲಿ , 27 ವಚನಕಾರರು , 207 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಗುರುಹಿರಿಯರ ಪಾದಸೇವೆಯ ನೆರೆ ಮಾಡುವ ಪರಿಯ ಕೇಳಿರೊ ಭಕ್ತರು. ಮಾಡಿ ನೀಡುವಲ್ಲಿ ಸೊರಗಿ ಸೊಕ್ಕಿ ಕೆಕ್ಕಸಗೆಲವುತ್ತ ಮಾಡಲಾಗದು. ಸಲೆ ಪಂಕ್ತಿಯಲ್ಲಿ ಸಂಚು ವಂಚನೆ ಸನ್ನೆ ಸಟೆ ಮೈಸಂಜ್ಞೆಯಲುಂಬುದ ಬಿಟ್ಟು ಪನ್ನಗಧರನ ಶರಣರಿಗೆ ಬಿನ್ನಹವಮಾಡಿ ಬಿಜಯಂಗೆಯಿಸಿ ತಂದು ಪರಮಾನ್ನ ಪರಿಮಳದಗ್ಘಣಿಯ ನೀಡುವ ಭಕ್ತರಿಗೆ ಮುಕ್ತಿ ಕಾಣಾ ಅಖಂಡ ಪರಿಪೂರ್ಣ ಘನಲಿಂಗಗುರು ಚೆನ್ನಬಸವೇಶ್ವರ ಶಿವಸಾಕ್ಷಿಯಾಗಿ.
--------------
ಕುಷ್ಟಗಿ ಕರಿಬಸವೇಶ್ವರ
ಚರಾಚರಾತ್ಮಕ ಪ್ರಪಂಚವೆಲ್ಲ ಶಿವನ ಚಿದ್ಗರ್ಭದಿಂದುಯಿಸಿಪ್ಪವೆಂದು, ಶಿವಾಭಿನ್ನತ್ವದಿಂ ಸಕಲಪ್ರಾಣಿಗಳಲ್ಲಿ ತನ್ನಾತ್ಮಚೇತನವ ತನ್ನಲ್ಲಿ ಸಕಲ ಪ್ರಾಣಿಗಳ ಆತ್ಮ ಚೇತನವ ಕಂಡು, ದಯಾಪರತ್ವವನುಳ್ಳ ಸರ್ವಜ್ಞತಾ ಶಕ್ತಿಯನು ಭಕ್ತಿಸ್ಥಲದಲ್ಲಿ ಪಡೆವುದು ನೋಡಾ. ತನಗೆ ಬಂದ ಅಪವಾದ ನಿಂದೆ ಎಡರಾಪತ್ತುಗಳಲ್ಲಿ ಎದೆಗುಂದದೆ ಬಪ್ಪ ಸುಖ ದುಃಖ ಖೇದ ಹರ್ಷಾದಿಗಳು ಶಿವಾಜ್ಞೆಯಹುದೆಂದು ಪರಿಣತನಪ್ಪ ತೃಪ್ತಿಯ ಶಕ್ತಿಯನು ಮಾಹೇಶ್ವರಸ್ಥಲದಲ್ಲಿ ಪಡೆವುದು ನೋಡಾ. ದೇಹಾದಿ ಆದಿ ಪ್ರಪಂಚಕ್ಕೆ ಮೂಲಿಗನಾದ ಅನಾದಿ ಪರಶಿವನು ಪ್ರಸನ್ನತ್ವವನುಂಟುಮಾಡುವ ಅನಾದಿ ಬೋಧ ಶಕ್ತಿಯನು ಪ್ರಸಾದಿಸ್ಥಲದಲ್ಲಿ ಪಡೆವುದು ನೋಡಾ. ಅಂತಪ್ಪ ದೇಹಾದಿ ಪ್ರಪಂಚದ ಚಲನವಲನವು ತನ್ನಾಶ್ರಯದಲ್ಲಿ ನಡೆದು ತಾನು ಆವುದನ್ನೂ ಆಶ್ರಯಿಸದೆ ಸರ್ವಸ್ವತಂತ್ರ ತಾನೆಂಬರಿವನುಂಟುಮಾಡುವ ಸ್ವತಂತ್ರ ಶಕ್ತಿಯನು ಪ್ರಾಣಲಿಂಗಿಸ್ಥಲದಲ್ಲಿ ಪಡೆವುದು ನೋಡಾ. ತನ್ನಾಶ್ರಯವ ಪಡೆದ ದೃಶ್ಯಮಾನ ದೇಹಾದಿ ಜಗವೆಲ್ಲ ಅನಿತ್ಯವೆಂಬ ಆ ದೃಶ್ಯಮಾನದೇಹಾದಿಗಳ ಮೂಲೋತ್ಪತ್ತಿಗಳಿಗೆ ಕಾರಣನಪ್ಪ ಪತಿಪರಶಿವಲಿಂಗವೇ ನಿತ್ಯವೆಂಬರಿವನುಂಟುಮಾಡುವ ಅಲುಪ್ತ ಶಕ್ತಿಯನು ಶರಣಸ್ಥಲದಲ್ಲಿ ಪಡೆವುದು ನೋಡಾ. ಅಂಗಲಿಂಗಗಳ ಸಂಯೋಗವ ತೋರಿ, ಅಖಂಡ ಪರಶಿಲಿಂಗೈಕ್ಯವನುಂಟುಮಾಡಿ ಕೊಡುವ ಅನಂತ ಶಕ್ತಿಯನು ಐಕ್ಯಸ್ಥಲದಲ್ಲಿ ಪಡೆವುದು ನೋಡಾ. ಇದಕ್ಕೆ ಶಿವರಹಸ್ಯೇ ; 'ಯದ್ಭಕ್ತಿಸ್ಥಲಮಿತ್ಯಾಹುಸ್ತತ್ಸರ್ವಜ್ಞತ್ವಮಿತೀರ್ಯತೇ ೀ ಯನ್ಮಾಹೇಶ್ವರಂ ನಾಮ ಸಾ ತೃಪ್ತಿರ್ಮಮ ಶಾಂಕರಿ || ಯತ್ಪ್ರಸಾದಾಭಿದಂ ಸ್ಥಾನಂ ತದ್ಬೋಧೋ ನಿರಂಕುಶಃ ೀ ಯತ್ಪ್ರಣಲಿಂಗಕಂ ನಾಮ ತತ್ಸ್ವಾತಂತ್ರೈಮುದಾಹೃತಂ || ಯದಸ್ತಿ ಶರಣಂ ನಾಮ ಹ್ಯಲುಪ್ತಾ ಶಕ್ತಿರುಚ್ಯತೇ ೀ ಯದೈಕ್ಯಸ್ಥಾನಮೂರ್ಧಸ್ಥಾ ಹ್ಯನಂತಾಶಕ್ತಿರುಚ್ಯತೇ ||ú ಎಂದುದಾಗಿ, ಇಂತಪ್ಪ ಷಟ್‍ಸ್ಥಲಗಳಲ್ಲಿ ಷಡ್ವಿಧ ಶಕ್ತಿಗಳ ಸ್ಥಳಕುಳಂಗಳ ತಿಳಿದು, ಷಡ್ವಿಧ ಲಿಂಗಗಳಲ್ಲಿ ಧ್ಯಾನ ಪೂಜಾದಿಗಳಿಂದ ಅಂಗಗೊಂಡು ಭವದ ಬಟ್ಟೆಯ ಮೆಟ್ಟಿ ನಿಂದಲ್ಲದೆ ಷಟ್‍ಸ್ಥಲಬ್ರಹ್ಮಿಗಳಾಗರು. ಇಂತಲ್ಲದೆ ಅಪವಾದ ನಿಂದೆಗಳ ಪರರ ಮೇಲೆ ಕಣ್ಗಾಣದೆ ಹೊರಿಸುತ್ತ ಪರದಾರ ದಾಶಿ ವೇಶಿ ಸೂಳೆಯರ ಕೂಡಿ ಭುಂಜಿಸಿ ತೊಂಬಲತಿಂಬ ಹೇಸಿ ಮೂಳರು ಪೋತರಾಜ, ಜೋಗಿ, ಕ್ಷಪಣರಂತೆ ಜಟಾ, ತುರುಬು, ಬೋಳುಮುಂಡೆಗೊಂಡು ಕೂಳಿಗಾಗಿ ತಿರುಗುವ ಮೂಳ ಚುಕ್ಕೆಯರ ವಿರಕ್ತ ಷಟ್‍ಸ್ಥಲಬ್ರಹ್ಮಿಗಳೆನಬಹುದೇನಯ್ಯ ? ಅಂತಪ್ಪ ಅನಾದಿ ಷಟ್‍ಸ್ಥಲಬ್ರಹ್ಮದ ಷಡ್ವಿಧಶಕ್ತಿಯನರಿದು ವಿರಕ್ತ ಜಂಗಮ ಷಟ್‍ಸ್ಥಲ ಬಾಲಬ್ರಹ್ಮಿ ನಿರಾಭಾರಿಯಾದ ಚೆನ್ನಬಸವಣ್ಣನ ಶ್ರೀಪಾದಕ್ಕೆ ನಮೋ ನಮೋ ಎಂಬೆನಯ್ಯಾ ಚೆನ್ನಮಲ್ಲಿಕಾರ್ಜುನಾ.
--------------
ಅಕ್ಕಮಹಾದೇವಿ
ಯಮ, ನಿಯಮ, ಆಸನ, ಪ್ರಾಣಾಯಾಮ, ಪ್ರತ್ಯಾಹಾರ, ಧ್ಯಾನ, ಧಾರಣ, ಸಮಾದ್ಥಿ ಎಂದು ಈಯೆಂಟು ಅಷ್ಟಾಂಗಯೋಗಂಗಳು. ಈ ಯೋಗಂಗಳೊಳಗೆ ಉತ್ತರಭಾಗ, ಪೂರ್ವಭಾಗೆಯೆಂದು ಎರಡು ಪ್ರಕಾರವಾಗಿಹವು. ಯಮಾದಿ ಪಂಚಕವೈದು ಪೂರ್ವಯೋಗ; ಧ್ಯಾನ, ಧಾರಣ, ಸಮಾದ್ಥಿಯೆಂದು ಮೂರು ಉತ್ತರಯೋಗ. ಇವಕ್ಕೆ ವಿವರ: ಇನ್ನು ಯಮಯೋಗ ಅದಕ್ಕೆ ವಿವರ: ಅನೃತ, ಹಿಂಸೆ, ಪರಧನ, ಪರಸ್ತ್ರೀ, ಪರನಿಂದೆ ಇಂತಿವೈದನು ಬಿಟ್ಟು ಲಿಂಗಪೂಜೆಯ ಮಾಡುವುದೀಗ ಯಮಯೋಗ. ಇನ್ನು ನಿಯಮಯೋಗ- ಅದಕ್ಕೆ ವಿವರ: ಬ್ರಹ್ಮಚಾರಿಯಾಗಿ ನಿರಪೇಕ್ಷನಾಗಿ ಆಗಮಧರ್ಮಂಗಳಲ್ಲಿ ನಡೆವವನು. ಶಿವನಿಂದೆಯ ಕೇಳದಿಹನು. ಇಂದ್ರಿಯಂಗಳ ನಿಗ್ರಹವ ಮಾಡುವವನು. ಮಾನಸ, ವಾಚಸ, ಉಪಾಂಶಿಕವೆಂಬ ತ್ರಿಕರಣದಲ್ಲಿ ಪ್ರಣವ ಪಂಚಾಕ್ಷರಿಯ ಸ್ಮರಿಸುತ್ತ ಶುಚಿಯಾಗಿಹನು. ಆಶುಚಿತ್ತವ ಬಿಟ್ಟು ವಿಭೂತಿ ರುದ್ರಾಕ್ಷೆಯ ಧರಿಸಿ ಶಿವಲಿಂಗಾರ್ಚನತತ್ಪರನಾಗಿ ಪಾಪಕ್ಕೆ ಬ್ಥೀತನಾಗಿಹನು. ಇದು ನಿಯಮಯೋಗ. ಇನ್ನು ಆಸನಯೋಗ- ಅದಕ್ಕೆ ವಿವರ: ಸಿದ್ಧಾಸನ, ಪದ್ಮಾಸನ, ಸ್ವಸ್ತಿಕಾಸನ, ಅರ್ಧಚಂದ್ರಾಸನ, ಪರ್ಯಂಕಾಸನ ಈ ಐದು ಆಸನಯೋಗಂಗಳಲ್ಲಿ ಸ್ವಸ್ಥಿರಚಿತ್ತನಾಗಿ ಮೂರ್ತಿಗೊಂಡು ಶಿವಲಿಂಗಾರ್ಚನೆಯ ಮಾಡುವುದೀಗ ಆಸನಯೋಗ. ಇನ್ನು ಪ್ರಾಣಾಯಾಮ- ಅದಕ್ಕೆ ವಿವರ: ಪ್ರಾಣ, ಅಪಾನ, ವ್ಯಾನ, ಉದಾನ, ಸಮಾನ, ನಾಗ, ಕೂರ್ಮ, ಕೃಕರ, ದೇವದತ್ತ, ಧನಂಜಯವೆಂಬ ದಶವಾಯುಗಳು. ಇವಕ್ಕೆ ವಿವರ: ಪ್ರಾಣವಾಯು ಇಂದ್ರ ನೀಲವರ್ಣ. ಹೃದಯಸ್ಥಾನದಲ್ಲಿರ್ದ ಉಂಗುಷ್ಠತೊಡಗಿ ವಾ[ಣಾ]ಗ್ರಪರಿಯಂತರದಲ್ಲಿ ಸತ್ಪ್ರಾಣಿಸಿಕೊಂಡು ಉಚ್ಛಾಸ ನಿಶ್ವಾಸನಂಗೆಯ್ದು ಅನ್ನ ಜೀರ್ಣೀಕರಣವಂ ಮಾಡಿಸುತ್ತಿಹುದು. ಅಪಾನವಾಯು ಹರಿತವರ್ಣ. ಗುಧಸ್ಥಾನದಲ್ಲಿರ್ದು ಮಲಮೂತ್ರಂಗಳ ವಿಸರ್ಜನೆಯಂ ಮಾಡಿಸಿ ಆಧೋದ್ವಾರಮಂ ಬಲಿದು ಅನ್ನರಸ ವ್ಯಾಪ್ತಿಯಂ ಮಾಡಿಸುತ್ತಿಹುದು. ವ್ಯಾನವಾಯು ಗೋಕ್ಷಿರವರ್ಣ. ಸರ್ವಸಂದಿಗಳಲ್ಲಿರ್ದು ನೀಡಿಕೊಂಡಿರ್ದುದನು ಮುದುಡಿಕೊಂಡಿರ್ದುದನು ಅನುಮಾಡಿಸಿ ಅನ್ನಪಾನವ ತುಂಬಿಸುತ್ತಿಹುದು. ಉದಾನವಾಯ ಎಳೆಮಿಂಚಿನವರ್ಣ. ಕಂಠಸ್ಥಾನದಲ್ಲಿರ್ದು ಸೀನುವ, ಕೆಮ್ಮುವ, ಕನಸ ಕಾಣುವ, ಏಳಿಸುವ ಛರ್ದಿ ನಿರೋಧನಂಗಳಂ ಮಾಡಿ ಅನ್ನ ರಸವ ಆಹಾರಸ್ಥಾನಂಗೆಯಿಸುತ್ತಿಹುದು. ಸಮಾನವಾಯು ನೀಲವರ್ಣ. ನಾಬ್ಥಿಸ್ಥಾನದಲ್ಲಿರ್ದು ಅಪಾದಮಸ್ತಕ ಪರಿಯಂತರ ದೇಹಮಂ ಪಸರಿಸಿಕೊಂಡಂಥಾ ಅನ್ನರಸವನು ಎಲ್ಲಾ[ಲೋ] ಮನಾಳಂಗಳಿಗೆ ಹಂಚಿಕ್ಕುವುದು. ಈ ಐದು ಪ್ರಾಣಪಂಚಕ. ಇನ್ನು ನಾಗವಾಯು ಪೀತವರ್ಣ. [ಲೋ] ಮನಾಳಂಗಳಲ್ಲಿರ್ದು ಚಲನೆಯಿಲ್ಲದೆ ಹಾಡಿಸುತ್ತಿಹುದು. ಕೂಮವಾಯುವ ಶ್ವೇತವರ್ಣ. ಉದರ ಲಲಾಟದಲ್ಲಿರ್ದು ಶರೀರಮಂ ತಾಳ್ದು [ದೇಹಮಂ] ಪುಷ್ಟಿಯಂ ಮಾಡಿಕೊಂಡು ಬಾಯ ಮುಚ್ಚುತ್ತ ತೆರೆವುತ್ತ ನೇತ್ರದಲ್ಲಿ ಉನ್ಮೀಲನ ನಿಮೀಲನವಂ ಮಾಡಿಸುತ್ತಿಹುದು. ಕೃಕರವಾಯು ಅಂಜನವರ್ಣ. ನಾಸಿಕಾಗ್ರದಲ್ಲಿರ್ದು ಕ್ಷುಧಾದಿ ಧರ್ಮಂಗಳಂ ನೆಗಳೆ ಗಮನಾಗಮನಂಗಳಂ ಮಾಡಿಸುತ್ತಿಹುದು. ದೇವದತ್ತವಾಯು ಸ್ಫಟಿಕವರ್ಣ. ಗುಹ್ಯ[ಕಟಿ] ಸ್ಥಾನದಲ್ಲಿರ್ದು ಕುಳ್ಳಿರ್ದಲ್ಲಿ ಮಲಗಿಸಿ, ಮಲಗಿರ್ದಲ್ಲಿ ಏಳಿಸಿ ನಿಂದಿರಿಸಿ ಚೇತರಿಸಿ ಒರಲಿಸಿ ಮಾತಾಡಿಸುತ್ತಿಹುದು. ಧನಂಜಯವಾಯು ನೀಲವರ್ಣ. ಬ್ರಹ್ಮರಂಧ್ರದಲ್ಲಿರ್ದು ಕರ್ಣದಲ್ಲಿ ಸಮುದ್ರಘೋಷಮಂ ಘೋಷಿಸಿ ಮರಣಗಾಲಕ್ಕೆ ನಿರ್ಘೋಷಮಪ್ಪುದು. ಈ ಪ್ರಕಾರದಲ್ಲಿ ಮೂಲವಾಯುವೊಂದೇ ಸರ್ವಾಂಗದಲ್ಲಿ ಸರ್ವತೋಮುಖವಾಗಿ ಚರಿಸುತ್ತಿಹುದು. ಆ ಪವನದೊಡನೆ ಪ್ರಾಣ ಕೂಡಿ ಪ್ರಾಣದೊಡನೆ ಪವನ ಕೂಡಿ ಹೃದಯ ಸ್ಥಾನದಲ್ಲಿ ನಿಂದು ಹಂಸನೆನಿಸಿಕೊಂಡು ಆಧಾರ, ಸ್ವಾದ್ಥಿಷ್ಠಾನ, ಮಣಿಪೂರಕ, ಅನಾಹತ, ವಿಶುದ್ಧಿ, ಆಗ್ನೇಯ ಎಂಬ ಷಡುಚಕ್ರದಳಂಗಳಮೇಲೆ ಸುಳಿದು ನವನಾಳಂಗಳೊಳಗೆ ಚರಿಸುತ್ತಿಹುದು. ಅಷ್ಟದಳಂಗಳೇ ಆಶ್ರಯವಾಗಿ ಅಷ್ಟದಳಂಗಳ ಮೆಟ್ಟಿ ಚರಿಸುವ ಹಂಸನು ಅಷ್ಟದಳಂಗಳಿಂದ ವಿಶುದ್ಧಿಚಕ್ರವನೆಯ್ದಿ ಅಲ್ಲಿಂದ ನಾಸಿಕಾಗ್ರದಲ್ಲಿ ಹದಿನಾರಂಗುಲ ಪ್ರಮಾಣ ಹೊರಸೂಸುತ್ತಿಹುದು; ಹನ್ನೆರಡಂಗುಲ ಪ್ರಮಾಣ ಒಳಗೆ ತುಂಬುತ್ತಿಹುದು. ಹೀಂಗೆ ರೇಚಕ ಪೂರಕದಿಂದ ಮರುತ ಚರಿಸುತ್ತಿರಲು ಸಮಸ್ತ್ರ ಪ್ರಾಣಿಗಳ ಆಯುಷ್ಯವು ದಿನ ದಿನಕ್ಕೆ ಕುಂದುತ್ತಿಹುದು. ಹೀಂಗೆ ಈಡಾ ಪಿಂಗಳದಲ್ಲಿ ಚರಿಸುವ ರೇಚಕ ಪೂರಕಂಗಳ ಭೇದವನರಿದು ಮನ ಪವನಂಗಳ ಮೇಲೆ ಲಿಂಗವ ಸಂಬಂದ್ಥಿಸಿ ಮನ ಪವನ ಪ್ರಾಣಂಗಳ ಲಿಂಗದೊಡನೆ ಕೂಡಿ ಲಿಂಗ ಸ್ವರೂಪವ ಮಾಡಿ ವಾಯು ಪ್ರಾಣತ್ವವ ಕಳೆದು ಲಿಂಗ ಪ್ರಾಣಿಯ ಮಾಡಿ ಹೃದಯ ಕಮಲ ಮಧ್ಯದಲ್ಲಿ ಪ್ರಣವವನುಚ್ಚರಿಸುತ್ತ ಪರಶಿವ ಧ್ಯಾನದಲ್ಲಿ ತರಹರವಾಗಿಪ್ಪುದೀಗ ಪ್ರಾಣಾಯಾಮ. ಇನ್ನು ಪ್ರತ್ಯಾಹಾರಯೋಗ-ಅದಕ್ಕೆ ವಿವರ: ಆಹಾರದಿಂ ನಿದ್ರೆ, ನಿದ್ರೆಯಿಂ ಇಂದ್ರಿಯಂಗಳು, ಇಂದ್ರಿಯಂಗಳಿಂದ ವಿಷಯಂಗಳು ಘನವಾಗುತ್ತಿಹುವು ನೋಡಾ. ಆ ವಿಷಯದಿಂದ ದುಃಕರ್ಮಗಳ ಮಿಗೆ ಮಾಡಿ ಜೀವಂಗೆ ಭವ ಭವದ ಬಂಧನವನೊಡಗೂಡಿ ಆಯಸಂ ಬಡುತ್ತಿಪ್ಪರಜ್ಞ್ಞಾನ ಕರ್ಮಿಗಳು; ಈ ಅವಸ್ಥೆಯ ಹೊಗದಿಹರು ಸುಜ್ಞಾನಿ ಧರ್ಮಿಗಳು. ಅದರಿಂದಲಾಹಾರಮಂ ಕ್ರಮ ಕ್ರಮದಿಂದ ಉದರಕ್ಕೆ ಹವಣಿಸುತ್ತ ಬಹುದು. ಗುರು ಕೃಪೆಯಿಂದ ಈ ಪ್ರಕಾರದಲ್ಲಿ ಸರ್ವೇಂದ್ರಿಯಂಗಳನು ಲಿಂಗಮುಖದಿಂದ ಸಾವಧಾನವ ಮಾಡಿಕೊಂಡಿಪ್ಪುದೀಗ ಪ್ರತ್ಯಾಹಾರಯೋಗ. ಈ ಐದು ಪೂರ್ವಯೋಗಂಗಳು. ಇನ್ನು ಧ್ಯಾನ, ಧಾರಣ, ಸಮಾದ್ಥಿಯೆಂದು ಮೂರು ಉತ್ತರಯೋಗಂಗಳು. ಇನ್ನು ಧ್ಯಾನಯೋಗ- ಅದಕ್ಕೆ ವಿವರ: ಅಂತರಂಗದ ಶುದ್ಧ ಪರಮಾತ್ಮ ಲಿಂಗವನೇ ಶಿವಲಿಂಗ ಸ್ವರೂಪವ ಮಾಡಿ ಕರಸ್ಥಲಕ್ಕೆ ಶ್ರೀಗುರು ತಂದು ಕೊಟ್ಟನಾಗಿ ಆ ಕರಸ್ಥಲದಲ್ಲಿದ್ದ ಶಿವಲಿಂಗವೇ ಪರಮಾರ್ಥಚಿಹ್ನವೆಂದರಿದು ಆ ಲಿಂಗವನೇ ಆಧಾರ, ಸ್ವಾದ್ಥಿಷ್ಠಾನ, ಮಣಿಪೂರಕ, ಅನಾಹತ, ವಿಶುದ್ಧಿ, ಆಜ್ಞೇಯ, ಬ್ರಹ್ಮರಂಧ್ರ ಮುಖ್ಯವಾದ ಸ್ಥಾನಂಗಳಲ್ಲಿ ಆ ಶಿವಲಿಂಗಮೂರ್ತಿಯನೆ ಆಹ್ವಾನ ವಿಸರ್ಜನೆಯಿಲ್ಲದೆ ಧ್ಯಾನಿಪುದೀಗ ಧ್ಯಾನಯೋಗ. ಆ ಲಿಂಗವ ಭಾವ, ಮನ, ಕರಣ ಮುಖ್ಯವಾದ ಸರ್ವಾಂಗದಲ್ಲಿ ಧರಿಸುವುದೀಗ ಧಾರಣಯೋಗ. ಆ ಸತ್ಕಿ ್ರಯಾ ಜ್ಞಾನಯೋಗದಿಂದ ಪ್ರಾಣಂಗೆ ಶಿವಕಳೆಯ ಸಂಬಂದ್ಥಿಸಿ ಇಷ್ಟ, ಪ್ರಾಣ, ಭಾವವೆಂಬ ಲಿಂಗತ್ರಯವನು ಏಕಾಕಾರವ ಮಾಡಿ ಅಖಂಡ ಪರಿಪೂರ್ಣ ಕೇವಲ ಪರಂಜ್ಯೋತಿ ಸ್ವರೂಪವಪ್ಪ ಮಹಾಲಿಂಗದೊಳಗೆ ಸಂಯೋಗವಾಗಿ ಬ್ಥಿನ್ನವಿಲ್ಲದೆ ಏಕಾರ್ಥವಾಗಿಹುದೀಗ ಸಮಾದ್ಥಿಯೋಗ. ಇಂತೀ ಅಷ್ಟಾಂಗಯೋಗದಲ್ಲಿ ಶಿವಲಿಂಗಾರ್ಚನೆಯ ಮಾಡಿ ಶಿವತತ್ವದೊಡನೆ ಕೂಡುವುದೀಗ ಲಿಂಗಾಂಗಯೋಗ. ಇನ್ನು ಕರ್ಮಕಾಂಡಿಗಳು ಮಾಡುವ ಕರ್ಮಯೋಗಂಗಳು- ಅವಾವವೆಂದಡೆ: ಯಮ, ನಿಯಮ, ಆಸನ, ಪ್ರಾಣಾಯಾಮ, ಪ್ರತ್ಯಾಹಾರವೆಂಬ ಈ ಐದನು ಲಿಂಗವಿರಹಿತವಾಗಿ ಮಾಡುತ್ತಿಪ್ಪರಾಗಿ ಈ ಐದು ಕರ್ಮಯೋಗಂಗಳು. ಅವರು ಲಕ್ಷಿಸುವಂಥಾ ವಸ್ತುಗಳು ಉತ್ತರಯೋಗವಾಗಿ ಮೂರು ತೆರ. ಅವಾವವೆಂದಡೆ: ನಾದಲಕ್ಷ ್ಯ, ಬಿಂದುಲಕ್ಷ ್ಯ, ಕಲಾಲಕ್ಷ ್ಯವೆಂದು ಮೂರು ತೆರ. ನಾದವೇ ಸಾಕ್ಷಾತ್ ಪರತತ್ವವೆಂದೇ ಲಕ್ಷಿಸುವರು. ಬಿಂದುವೇ ಆಕಾರ, ಉಕಾರ, ಮಕಾರ, ಈ ಮೂರು ಶುದ್ಧಬಿಂದು ಸಂಬಂಧವೆಂದೂ. ಆ ಶುದ್ಧ ಬಿಂದುವೇ ಕೇವಲ ದಿವ್ಯ ಪ್ರಕಾಶವನುಳ್ಳದೆಂದೂ ಲಕ್ಷಿಸುವರು. ಕಲೆಯೇ ಚಂದ್ರನ ಕಲೆಯ ಹಾಂಗೆ, ಸೂರ್ಯನ ಕಿರಣಂಗಳ ಹಾಂಗೆ, ಮಿಂಚುಗಳ ಪ್ರಕಾಶದ ಹಾಂಗೆ, ಮುತ್ತು, ಮಾಣಿಕ್ಯ, ನವರತ್ನದ ದೀಪ್ತಿಗಳ ಹಾಂಗೆ, ಪ್ರಕಾಶಮಾಯವಾಗಿಹುದೆಂದು ಲಕ್ಷಿಸುವುದೀಗ ಕಲಾಲಕ್ಷ ್ಯ. ಈ ಎಂಟು ಇತರ ಮತದವರು ಮಾಡುವ ಯೋಗಂಗಳು. ಇವ ಲಿಂಗವಿರಹಿತವಾಗಿ ಮಾಡುವರಾಗಿ ಕರ್ಮಯೋಗಂಗಳು. ಈ ಕರ್ಮಕೌಶಲ್ಯದಲ್ಲಿ ಲಿಂಗವಿಲ್ಲ ನೋಡಾ. ಅದುಕಾರಣ ಇವ ಮುಟ್ಟಲಾಗದು. ಇನ್ನು ವೀರಮಾಹೇಶ್ವರರುಗಳ ಲಿಂಗಸಂಧಾನವೆಂತೆಂದರೆ: ಬ್ರಹ್ಮರಂಧ್ರದಲ್ಲಿಪ್ಪ ನಾದ ಚೈತನ್ಯವಪ್ಪ ಪರಮ ಚಿತ್ಕಲೆಯನೇ ಭಾವ, ಮನ, ಕರದಲ್ಲಿ ಶ್ರೀಗುರು ತಂದು ಸಾಹಿತ್ಯವ ಮಾಡಿದನಾಗಿ ಭಾವದಲ್ಲಿ ಸತ್ತ್ವರೂಪವಪ್ಪ ಭಾವಲಿಂಗವೆನಿಸಿ, ಪ್ರಾಣದಲ್ಲಿ ಚಿತ್ ಸ್ವರೂಪವಪ್ಪ ಪ್ರಾಣಲಿಂಗವೆನಿಸಿ, ಕರಸ್ಥಲದಲ್ಲಿ ಆನಂದ ಸ್ವರೂಪವಪ್ಪ ಇಷ್ಟಲಿಂಗವೆನಿಸಿ, ಒಂದೇ ವಸ್ತು ತನು, ಮನ, ಭಾವಂಗಳಲ್ಲಿ ಇಷ್ಟ, ಪ್ರಾಣ, ಭಾವವಾದ ಭೇದವನರಿದು ಇಷ್ಟಲಿಂಗವ ದೃಷ್ಟಿಯಿಂದ ಗ್ರಹಿಸಿ ಪ್ರಾಣಲಿಂಗವ ಮನಜ್ಞಾನದಿಂದ ಗ್ರಹಿಸಿ ತೃಪ್ತಿಲಿಂಗವ ಭಾವಜ್ಞಾನದಿಂದ ಗ್ರಹಿಸಿ ಈ ಲಿಂಗತ್ರಯವಿಡಿದಾಚರಿಸಿ ಲಿಂಗದೊಡನೆ ಕೂಡಿ ಲಿಂಗವೇ ತಾನು ತಾನಾಗಿ ವಿರಾಜಿಸುತ್ತಿಪ್ಪುದೀಗ ಶಿವಯೋಗ ನೋಡಾ, ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.
--------------
ತೋಂಟದ ಸಿದ್ಧಲಿಂಗ ಶಿವಯೋಗಿಗಳು
ಪಾದೋದಕ ಪ್ರಸಾದವ ಕೊಂಡು ಪ್ರಪಂಚವ ಮಾಡುವ ಪರಸತಿಯರ ಸಂಗವ ಮಾಡುವ ಪಂಚಮಹಾಪಾತಕರು ನೀವು ಕೇಳಿರೊ. ಪಂಚಮಹಾಪಾತಕವ ಬಿಟ್ಟದ್ದೇ ಪಾದೋದಕ. ಅಲ್ಲದಿದ್ದಡೆ ಮುಂದೆ ನಿಮ್ಮ ಬಾದ್ಥಿಸುವದಕ್ಕೆ ಕಾದಸೀಸ. ಪ್ರಸಾದವೆ ಮುಂದೆ ನಿಮ್ಮ ಪೊರೆವುದಕ್ಕೆ ಪರುಷ. ಪ್ರಪಂಚ ಮುಂದೆ ನಿಮ್ಮ ಪಾಕುಳಕ್ಕೆ ಹಾಕುವುದು. ಪರಸ್ತ್ರೀಯರ ಸಂಗವೆ ಮುಂದೆ ನಿಮಗೆ ಉರಿಗಿಚ್ಚು, ಇರಿವ ಸುರಗಿ. ಇಂತಿವ ಬಿಟ್ಟು ಭಕ್ತ ವಿರಕ್ತನಾಗಿ ಗುರು ಲಿಂಗ ಜಂಗಮ ಪಾದೋದಕ ಪ್ರಸಾದವ ನಂಬಿದರೆ ಪರಶಿವ ನಮಗೊಲಿವ ಕಾಣಾ ಅಖಂಡ ಪರಿಪೂರ್ಣ ಘನಲಿಂಗಗುರು ಚೆನ್ನಬಸವೇಶ್ವರ ಶಿವಸಾಕ್ಷಿಯಾಗಿ.
--------------
ಕುಷ್ಟಗಿ ಕರಿಬಸವೇಶ್ವರ
ಒಬ್ಬರುತ್ತಮರೆಂಬರು. ಒಬ್ಬರು ಕನಿಷ್ಠರೆಂಬರು. ಒಬ್ಬರು ಅಧಮರೆಂಬರು. ಒಬ್ಬರು ಕಷ್ಟನಿಷ್ಠೂರಿಯೆಂಬರು. ಅಂದರದಕೇನು ಯೋಗ್ಯ? ವಿನಯಕಂಪಿತ ಪರಮಾರ್ಥಕ್ಕೂ ಲೌಕಿಕಕ್ಕೂ ವಿರುದ್ಭ ಕಾಣಾ ಅಖಂಡ ಪರಿಪೂರ್ಣ ಘನಲಿಂಗಗುರು ಚೆನ್ನಬಸವೇಶ್ವರ ಶಿವಸಾಕ್ಷಿಯಾಗಿ.
--------------
ಕುಷ್ಟಗಿ ಕರಿಬಸವೇಶ್ವರ
ಭವಾರಣ್ಯದಲ್ಲಿ ಪ್ರವೇಶಿಸುತ್ತಿಪ್ಪವಂಗೆ, ಬೆಂದಜ್ಞಾನದಿಂದ ಸುತ್ತುತ್ತ ಹಿಂದು ಮುಂದು ಎಡ ಬಲ ಆದಿ ಆಕಾಶ ನಡುಮಧ್ಯ ಆವುದೆಂದರಿಯದವಂಗೆ, ಇರುವುದಕ್ಕೆ ಇಂಬುಗಾಣದವಂಗೆ, ಶಿವತತ್ವವೆ ಆಶ್ರಯ ಇದೆಯೆಂದು ತೋರಿದ ಸದ್ಗುರುದೇವಂಗೆ ನಮೋ ನಮೋ ಎಂಬೆನಯ್ಯ ಅಖಂಡ ಪರಿಪೂರ್ಣ ಘನಲಿಂಗಗುರು ಚೆನ್ನಬಸವೇಶ್ವರ ಶಿವಸಾಕ್ಷಿಯಾಗಿ.
--------------
ಕುಷ್ಟಗಿ ಕರಿಬಸವೇಶ್ವರ
ಒಂದು ಜಡಿಯ ಬಿಚ್ಚಿ ಸಹಸ್ರ ಹುರಿಗೂಡಿದ ಒಂದು ಹಗ್ಗ. ಮೂರು ಹುರಿಗೂಡಿದ ಒಂದು ಹಗ್ಗ. ಒಂದು ಹುರಿಗೂಡಿದ ಒಂದು ಹಗ್ಗ. ನಾಲ್ಕು ಹುರಿಗೂಡಿದ ಒಂದು ಹಗ್ಗ. ಆರು ಹುರಿಗೂಡಿದ ಒಂದು ಹಗ್ಗ. ಹತ್ತು ಹುರಿಗೂಡಿದ ಒಂದು ಹಗ್ಗ. ದ್ವಾದಶ ಹುರಿಗೂಡಿದ ಒಂದು ಹಗ್ಗ. ಷೋಡಶ ಹುರಿಗೂಡಿದ ಒಂದು ಹಗ್ಗ. ಎರಡು ಹುರಿಗೂಡಿದ ಒಂದು ಹಗ್ಗ. ಇಂತೀ ಹುರಿಗೂಡಿದ ಹಗ್ಗ ಮೊದಲಾದ ಅನೇಕ ಹುರಿಗೂಡಿದ ಒಂದು ಅಖಂಡ ಹಗ್ಗವಮಾಡಿ, ನಾಲ್ಕು ಹುರಿ ಹಗ್ಗದಿಂ ಬ್ರಹ್ಮನ ಕಟ್ಟಿ, ಷಡುಹುರಿ ಹಗ್ಗದಿಂ ವಿಷ್ಣುವಿನ ಕಟ್ಟಿ, ದಶಹುರಿ ಹಗ್ಗದಿಂ ರುದ್ರನ ಕಟ್ಟಿ, ದ್ವಾದಶಹುರಿ ಹಗ್ಗದಿಂ ಈಶ್ವರನ ಕಟ್ಟಿ, ಷೋಡಶಹುರಿ ಹಗ್ಗದಿಂ ಸದಾಶಿವನ ಕಟ್ಟಿ, ದ್ವಿಹುರಿ ಹಗ್ಗದಿಂ ಶಿವನ ಕಟ್ಟಿ, ಸಹಸ್ರ ಹುರಿಹಗ್ಗದಿಂ ಮತ್ರ್ಯದರಸನ ಕಟ್ಟಿ, ಮೂರು ಹುರಿಹಗ್ಗದಿಂ ಸ್ವರ್ಗಲೋಕದರಸನ ಕಟ್ಟಿ, ಒಂದು ಹುರಿಹಗ್ಗದಿಂ ಪಾತಾಳಲೋಕದರಸನ ಕಟ್ಟಿ, ಅನಂತ ಹುರಿಗೂಡಿದ ಅಖಂಡ ಹಗ್ಗದಿಂ ಚತುರ್ದಶಭುವನಯುಕ್ತವಾದ ಬ್ರಹ್ಮಾಂಡವ ಕಟ್ಟಿ, ಕಾಯಕವ ಮಾಡುತಿರ್ದನಯ್ಯ ಕಾಡನೊಳಗಾದ ಶಂಕರಪ್ರಿಯ ಚನ್ನಕದಂಬಲಿಂಗ ನಿರ್ಮಾಯಪ್ರಭುವೆ. ಈ ಭೇದವ ಬಲ್ಲವರು ಲಿಂಗಸಂಬಂದ್ಥಿಗಳು ಈ ಭೇದವ ತಿಳಿಯದವರು ಅಂಗಸಂಬಂದ್ಥಿಗಳು.
--------------
ಕಾಡಸಿದ್ಧೇಶ್ವರ
ಮಹಾಬಯಲ ಕಡಿದು ಎರಡು ಮಾಡಿಹೆನೆಂದಡೆ ಆ ಬಯಲು ಎರಡಹುದೆ ? ಅಣುರೇಣು ಮಧ್ಯಗುಣಭರಿತ ಅಖಂಡ ಬ್ರಹ್ಮವ ಪ್ರಾದೇಶಿಕ ಪರಿಶ್ಚಿನ್ನವೆಂದು ನುಡಿಯಲುಂಟೆ ನಿಃಕಳಂಕ ಮಲ್ಲಿಕಾರ್ಜುನಾ ?
--------------
ಮೋಳಿಗೆ ಮಾರಯ್ಯ
ಗುರುವೆ ಪರಮೇಶ್ವರನೆಂದು ಭಾವಿಸಬೇಕು ನೋಡಾ. ಎರಡೆಂದು ಪ್ರಕೃತಿಯ ತೋರಿದರೆ ಅದು ಅಜ್ಞಾನ ನೋಡಾ. ಇದು ಕಾರಣ, ಆವನಾನೋರ್ವನು ಎರಡೆಂದು ಭಾವಿಸಿದಡೆ ಅವನಿಗೆ ಅನೇಕಕಾಲ ನರಕದ ಕುಳಿಯೊಳಗೆಯಿಪ್ಪುದು ತಪ್ಪದು ಕಾಣಾ ಅಖಂಡ ಪರಿಪೂರ್ಣ ಘನಲಿಂಗಗುರು ಚೆನ್ನಬಸವೇಶ್ವರ ಶಿವಸಾಕ್ಷಿಯಾಗಿ.
--------------
ಕುಷ್ಟಗಿ ಕರಿಬಸವೇಶ್ವರ
ಆಯತವಾಯಿತ್ತು ಅನುಭಾವ, ಸ್ವಾಯತವಾಯಿತ್ತು ಶಿವಜ್ಞಾನ, ಸಮಾಧಾನವಾಯಿತ್ತು ಸದಾಚಾರ._ ಇಂತೀ ತ್ರಿವಿಧವು ಏಕಾರ್ಥವಾಗಿ, ಅರುಹಿನ ಹೃದಯ ಕಂದೆರೆದು, ಅನಂತಲೋಕಾಲೋಕದ ಅಸಂಖ್ಯಾತ ಮಹಾಗಣಂಗಳೆಲ್ಲರು ಲಿಂಗಭಾವದಲ್ಲಿ ಭರಿತರಾಗಿ, ಗಗನಸಿದ್ಧಾಂತದಿಂದ ಉಪದೇಶಕ್ಕೆ ಬಂದು ಭಕ್ತಿರಾಜ್ಯವನೆ ಹೊಕ್ಕು, ನಿಜಲಿಂಗಸುಕ್ಷೇತ್ರವನೆ ಕಂಡು, ಅಮೃತಸರೋವರದೊಳಗಣ ವಿವೇಕವೃಕ್ಷ ಪಲ್ಲವಿಸಲು ವಿರಕ್ತಿಯೆಂಬ ಪುಷ್ಪ ವಿಕಸಿತವಾಗಲು, ಪರಮಾನಂದವೆಂಬ ಮಠದೊಳಗೆ, ಪರಿಣಾಮ ಪಶ್ಚಿಮಜ್ಯೋತಿಯ ಬೆಳಗಿನಲ್ಲಿ ಪರುಷದ ಸಿಂಹಾಸನವನಿಕ್ಕಿ ಪ್ರಾಣಲಿಂಗ ಮೂರ್ತಿಗೊಂಡಿರಲು, ದಕ್ಷಿಣವ ದಾಂಟಿ ಉತ್ತರಾಬ್ಧಿಯಲ್ಲಿ ನಿಂದು ಅಖಂಡ ಪರಿಪೂರ್ಣಪೂಜೆಯ ಮಾಡುವವರಿಗೆ ನಮೋನಮೋ ಎಂಬೆ ಗುಹೇಶ್ವರಾ.
--------------
ಅಲ್ಲಮಪ್ರಭುದೇವರು
ಉಳ್ಳಿ ಇಂಗು ಬೆಲ್ಲ ಮೆಣಸು ಇವ ಕೊಳ್ಳಬಾರದುಯೆಂಬ ಒಳ್ಳೆ ವ್ರತಿಗಳು ನೀವು ಕೇಳಿರೊ. ಸುಳ್ಳು ಸಟೆಯ ಬಿಟ್ಟು ತಳ್ಳಿಬಳ್ಳಿಯ ಬಿಟ್ಟು ಒಳ್ಳಿತಾಗಿ ನಡೆಯಬಲ್ಲಡೆ ಬಳ್ಳೇಶ್ವರನ ಭಕ್ತರೆಂಬೆ ಕಾಣಾ ಅಖಂಡ ಪರಿಪೂರ್ಣ ಘನಲಿಂಗಗುರು ಚೆನ್ನಬಸವೇಶ್ವರ ಶಿವಸಾಕ್ಷಿಯಾಗಿ.
--------------
ಕುಷ್ಟಗಿ ಕರಿಬಸವೇಶ್ವರ
ಜೆಟ್ಟಿಗ ಬೀರ ಮೈಲಾರನೂ ರೊಟ್ಟಿಯ ಹಬ್ಬ ನಾಗರಪಂಚಮಿಯ ಮಾಡುವ ಹೊಲತಿ ಹೊಲೆಯನ ಮನೆಯ ಅನ್ನ ಕೆರನಟ್ಟೆಗೆ ಸರಿಯೆಂದು ಮುಟ್ಟರು ನಿಷ್ಠೆ ನಿರ್ವಾಣದ ಬಸವಭಕ್ತರು ಕಾಣಾ ಅಖಂಡ ಪರಿಪೂರ್ಣ ಘನಲಿಂಗಗುರು ಚೆನ್ನಬಸವೇಶ್ವರ ಶಿವಸಾಕ್ಷಿಯಾಗಿ.
--------------
ಕುಷ್ಟಗಿ ಕರಿಬಸವೇಶ್ವರ
ನಾಟ್ಯಸಾಲೆಯೊಳು ನಾಟ್ಯವನಾಡುವ ಹೆಣ್ಣು ಝಣಝಣ ಕಿಣಿಕಿಣಿಯೆಂದರೆ ಮುಸುರೆಯ ಮಡಕೆಯನು ತೊಳವುತ್ತ ಮೂಕೊರೆಯ ತೊತ್ತು ಗುಣುಗುಣುಯೆಂಬಂತೆ, ನವಿಲಾಡಿತೆಂದು ನಾಯಿ ಬಾಲವ ಬಡಕೊಂಬಂತೆ, ಕೋಗಿಲೆ ಕೂಗಿತ್ತೆಂದು ಕುಕ್ಕುಟ ಪುಚ್ಚವ ತರಕೊಂಡಂತೆ, ನಿಶ್ಚಯವಿಲ್ಲದವನ ಭಕ್ತಿ ಬಚ್ಚಲಬಾಲ್ವುಳುವಿನಂತೆ ಕಾಣಾ ಅಖಂಡ ಪರಿಪೂರ್ಣ ಘನಲಿಂಗಗುರು ಚೆನ್ನಬಸವೇಶ್ವರ ಶಿವಸಾಕ್ಷಿಯಾಗಿ.
--------------
ಕುಷ್ಟಗಿ ಕರಿಬಸವೇಶ್ವರ
ಇನ್ನು ನಿರಂಜನಾತೀತಪ್ರಣವ ಮೊದಲಾಗಿ ಬ್ರಹ್ಮ ಕಡೆಯಾಗಿ ಸೃಷ್ಟಿಮಾರ್ಗವ ಹೇಳುತ್ತಿದ್ದೆನು. ಅದೆಂತೆಂದೊಡೆ : ಆದಿಮೂಲ ಅನಾದಿಮೂಲಂಗಳಿಗತ್ತತ್ತವಾದ ಮಹಾಮೂಲಸ್ವಾಮಿಯ ಮೀರಿದ ಅತಿಮಹಾಮೂಲಸ್ವಾಮಿಗತ್ತತ್ತವಾಗಿಹ ಅಖಂಡ ಮಹಾಮೂಲಸ್ವಾಮಿಯ ನೆನಹುಮಾತ್ರದಲ್ಲಿಯೇ ನಿರಂಜನಾತೀತಪ್ರಣವ ಉತ್ಪತ್ತ್ಯವಾಯಿತ್ತು. ಆ ನಿರಂಜನಾತೀತಪ್ರಣವದ ನೆನಹುಮಾತ್ರದಲ್ಲಿಯೇ ನಿರಂಜನಪ್ರಣವ ಉತ್ಪತ್ತ್ಯವಾಯಿತ್ತು. ಆ ನಿರಂಜನಪ್ರಣವದ ನೆನಹುಮಾತ್ರದಲ್ಲಿಯೇ ಅವಾಚ್ಯಪ್ರಣವ ಉತ್ಪತ್ತ್ಯವಾಯಿತ್ತು. ಆ ಅವಾಚ್ಯಪ್ರಣವದ ನೆನಹುಮಾತ್ರದಲ್ಲಿಯೇ ಕಲಾಪ್ರಣವ ಉತ್ಪತ್ತ್ಯವಾಯಿತ್ತು. ಆ ಕಲಾಪ್ರಣವದ ನೆನಹುಮಾತ್ರದಲ್ಲಿಯೇ ಅನಾದಿಪ್ರಣವ ಉತ್ಪತ್ತ್ಯವಾಯಿತ್ತು. ಆ ಅನಾದಿಪ್ರಣವದ ನೆನಹುಮಾತ್ರದಲ್ಲಿಯೇ ಅನಾದಿ ಅಕಾರ ಉಕಾರ ಮಕಾರ ಉತ್ಪತ್ತ್ಯವಾಯಿತ್ತು. ಆ ಅನಾದಿ ಅಕಾರ ಉಕಾರ ಮಕಾರದ ನೆನಹುಮಾತ್ರದಲ್ಲಿಯೇ ಆದಿಪ್ರಣವ ಉತ್ಪತ್ತ್ಯವಾಯಿತ್ತು. ಆ ಆದಿಪ್ರಣವದ ನೆನಹುಮಾತ್ರದಲ್ಲಿಯೇ ಆದಿ ಅಕಾರ ಉಕಾರ ಮಕಾರ ಉತ್ಪತ್ತ್ಯವಾಯಿತ್ತು ನೋಡಾ. ಇದಕ್ಕೆ ಚಕ್ರಾತೀತಾಗಮೇ : ``ನಿರಂಜನಾತೀತಚಿಂತಾಯಾಂ ಅನಾದ್ಯೋಂಕಾರ ಸಂಭವಃ | ನಿರಂಜನಸ್ಯ ಚಿಂತಾಯಾಂ ಅವಾಚ್ಯಂ ನಾಮ ಜಾಯತೇ | ಅವಾಚ್ಯೋಂಕಾರ ಚಿಂತಾಯಾಂ ಕಲಾ ನಾಮ ಸಮುದ್ಭವಃ | ಕಲಾಪ್ರಣವಚಿಂತಾಯಾಂ ಅನಾದಿಪ್ರಣವೋ ಭವೇತ್ || ಅನಾದಿಪ್ರಣವ ಚಿಂತಾಯಾಂ ಆದಿ ಮಾತ್ರಸ್ಯ ಸಂಭವಃ | ಆದಿ ಮಾತ್ರಸ್ಯ ಚಿಂತಾಯಾಂ ಆದಿ ಪ್ರಣವಸಂಭವಃ | ಆದಿಪ್ರಣವಚಿಂತಾಯಾಂ ಅಕ್ಷರತ್ರಯಮುದ್ಗತಂ ||'' ಇಂತೆಂದುದಾಗಿ, ಇದಕ್ಕೆ ಅಥರ್ವಣವೇದ : ``ಓಂ ನಿರಂಜನಾತೀತಪ್ರಣವಾಖ್ಯಾ ನಿರಂಜನ ಪ್ರಣವ ಜಾಯತೇ | ನಿರಂಜನಪ್ರಣವ ತದಸ್ಯ ಅವಾಚ್ಯೋಂಕಾರ ಜಾಯತೇ | ಅವಾಚ್ಯೋಂಕಾರ ಚಿಂತಾಖ್ಯಾಂ ಕಲಾಪ್ರಣವಸ್ಯ ಜಾಯತೇ | ಕಲಾಪ್ರಣವಸ್ಯ ತದಸ್ಯ ಅನಾದ್ಯೋಂಕಾರ ಜಾಯತೇ | ಅನಾದ್ಯೋಂಕಾರಚಿಂತಾಯಾಂ ಅನಾದಿತ್ರ್ಯಕ್ಷರೋ ಜಾಯತೇ | ಅನಾದ್ಯರಕ್ಷರ ಚಿಂತಾಯಾಂ ಆದಿಪ್ರಣವ ಜಾಯತೇ | ಆದಿ ಪ್ರಣವಚಿಂತಾಯಾಂ ಅಕ್ಷರತ್ರಯಂ ಜಾಯತೇ ||'' ಇಂತೆಂದು ಶ್ರುತಿ, ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಸಚ್ಚಿದಾನಂದ ನಿತ್ಯಪರಿಪೂರ್ಣ ನಿಃಕಲ ಶಿವತತ್ವವು ತನ್ನಿಂದ ತಾನೆ ಅಖಂಡ ಪರಿಪೂರ್ಣ ಗೋಳಕಾಕಾರ ಪರಂಜ್ಯೋತಿಸ್ವರೂಪವಪ್ಪ ಮಹಾಲಿಂಗವಾಯಿತ್ತು ನೋಡಾ. ಆ ಲಿಂಗದ ಮಧ್ಯದಲ್ಲಿ ಬೀಜದಿಂದ ವೃಕ್ಷವು ಉದಯವಾಗುವ ಹಾಂಗೆ, ಆ ಲಿಂಗವು ತನ್ನ ಇಚ್ಛಾಶಕ್ತಿಯ ಕೂಡಿಕೊಂಡು, ಜಗದುತ್ಪತ್ತಿ ಸ್ಥಿತಿ ಲಯಂಗಳಿಗೆ ಕರ್ತುವಾಗಿ, ಸಕಲ ನಿಃಕಲವಾಗಿ, ಪಂಚಮುಖ ದಶಭುಜ ದಶಪಂಚನೇತ್ರ ದ್ವಿಪಾದ ತನುವೇಕ ಶುದ್ಧ ಸ್ಫಟಿಕವರ್ಣ ಧಾತುವಿನಿಂದ ಒಪ್ಪುತ್ತಿಪ್ಪುದು ಸದಾಶಿವಮೂರ್ತಿ. ಆ ಸದಾಶಿವನ ಈಶಾನ್ಯಮುಖದಲ್ಲಿ ಆಕಾಶ ಪುಟ್ಟಿತ್ತು. ತತ್ಪುರುಷಮುಖದಲ್ಲಿ ವಾಯು ಪುಟ್ಟಿತ್ತು. ಅಘೋರಮುಖದಲ್ಲಿ ಅಗ್ನಿ ಪುಟ್ಟಿತ್ತು. ವಾಮದೇವಮುಖದಲ್ಲಿ ಅಪ್ಪು ಪುಟ್ಟಿತ್ತು. ಸದ್ಯೋಜಾತಮುಖದಲ್ಲಿ ಪೃಥ್ವಿ ಪುಟ್ಟಿತ್ತು. ಮನಸ್ಸಿನಲ್ಲಿ ಚಂದ್ರ, ಚಕ್ಷುವಿನಲ್ಲಿ ಸೂರ್ಯ. ಪರಮಾತ್ಮ ಸ್ವರೂಪವಪ್ಪ ಗೋಪ್ಯಮುಖದಲ್ಲಿ ಆತ್ಮ ಹುಟ್ಟಿದನು. ಇಂತು, ಪೃಥ್ವಿ ಅಪ್ಪು ತೇಜ ವಾಯು ಆಕಾಶ ಚಂದ್ರ ಸೂರ್ಯ ಆತ್ಮನೆಂಬ ಶಿವನ ಅಷ್ಟತನುಮೂರ್ತಿಯೆ ಸಮಸ್ತ ಜಗತ್ತಾಯಿತ್ತು. ಆ ಜಗತ್ತಾವಾವವೆಂದಡೆ: ಚತುರ್ದಶ ಭುವನಂಗಳು, ಸಪ್ತ ಸಮುದ್ರಂಗಳು, ಸಪ್ತ ದ್ವೀಪಂಗಳು, ಸಪ್ತ ಕುಲಪರ್ವತಂಗಳು, ಸಮಸ್ತ ಗ್ರಹರಾಶಿ ತಾರಾಪಥಂಗಳಂ ಗಬ್ರ್ಥೀಕರಿಸಿಕೊಂಡು ಬ್ರಹ್ಮಾಂಡವೆನಿಸಿತ್ತು. ಇದು ಜಗದುತ್ಪತ್ತಿ ಕಾಣಾ, ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.
--------------
ತೋಂಟದ ಸಿದ್ಧಲಿಂಗ ಶಿವಯೋಗಿಗಳು
ಇನ್ನಷ್ಟು ... -->