ಅಥವಾ

ಒಟ್ಟು 48 ಕಡೆಗಳಲ್ಲಿ , 25 ವಚನಕಾರರು , 46 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಆಕಾರ ನಿರಾಕಾರವಿಲ್ಲದಂದು, ಹಮ್ಮುಬಿಮ್ಮುಗಳಿಲ್ಲದಂದು, ಜೀವ ಪರಮರಿಲ್ಲದಂದು, ಮನ ಮನನ ಮನುನೀಯವಿಲ್ಲದಂದು, ಶೂನ್ಯ ನಿಶೂನ್ಯ ನಾಮ ನಿರ್ನಾಮ ಇವೇನೂ ಇಲ್ಲದೆ, ಬಚ್ಚಬರಿಯ ಬಯಲೆ ಸಹಜದಿಂದ ಗಟ್ಟಿಗೊಂಡು, ಘನಲಿಂಗವೆಂಬ ಪುರುಷತತ್ತ್ವವಾಯಿತ್ತಯ್ಯ. ಆ ಘನಲಿಂಗದಿಂದ ಚಿಚ್ಛಕ್ತಿ ಜನಿಸಿದಳು. ಚಿಚ್ಚಕ್ತಿಯಿಂದ ಪರಶಕ್ತಿ ಪುಟ್ಟಿದಳು. ಪರಶಕ್ತಿಯಿಂದ ನಾದ ಬಿಂದು ಕಳೆಗಳಾದವು. ಅಕಾರವೇ ನಾದ, ಉಕಾರವೇ ಬಿಂದು, ಮಕಾರವೇ ಕಳೆ. ಇಂತೀ ತ್ರಿವಿಧಕ್ಕೆ ಪರಶಕ್ತಿಯೇ ತಾಯಿ. ಇಂತೀ ನಾಲ್ಕು ಒಂದಾದಲ್ಲಿ ಓಂಕಾರವಾಯಿತ್ತಯ್ಯ. ಮುಂದೀ ಪ್ರಣವ ತಾನೆ ಪಂಚಲಕ್ಷಣವಾಯಿತ್ತು. ಆ ಘನಲಿಂಗದಿಂದಲೇ ಪಂಚಸಾದಾಖ್ಯಮೂರ್ತಿಗಳಾದುವು. ಆ ಚಿಚ್ಛಕ್ತಿಯಿಂದಲೇ ಪಂಚಶಕ್ತಿಯರಾದರು. ಆ ಪಂಚಶಕ್ತಿಯರಿಂದಲೇ ಪಂಚಕಲೆಗಳಾದವು. ಆ ಪಂಚಲಕ್ಷಣವುಳ್ಳ ಮೂರ್ತಿ ತಾನೆ ತ್ರಯವಾದ ಭೇದವ ಹೇಳಿಹೆನು. ಅದೆಂತೆಂದಡೆ: ಶಿವತತ್ತ್ವ ಸದಾಶಿವತತ್ತ್ವ ಮಾಹೇಶ್ವರತತ್ತ್ವವೆಂದು ಮೂರುತೆರನಾಗಿಪ್ಪುದು. ಬಾಹ್ಯ ನಿಃಕಲತತ್ತ್ವವಾಗಿಪ್ಪುದು. ಒಂದು ಸಕಲನಿಃಕಲತತ್ತ್ವವಾಗಿಪ್ಪುದು. ಒಂದು ಸಕಲತತ್ತ್ವವಾಗಿಪ್ಪುದು. ಶಿವತತ್ತ್ವ ಏಕಮೇವ ಒಂದೆಯಾಗಿಪ್ಪುದು. ಸದಾಶಿವತತ್ತ್ವ ಐದುತೆರನಾಗಿಪ್ಪುದು. ಮಾಹೇಶ್ವರತತ್ವ ಇಪ್ಪತ್ತೆ ೈದು ತೆರನಾಗಿಪ್ಪುದು. ಹೀಂಗೆ ಶಿವತತ್ತ್ವ ಮೂವತ್ತೊಂದು ತೆರನೆಂದರಿವುದು. ಸ್ಥೂಲ, ಸೂಕ್ಷ ್ಮ, ಪರತತ್ವವೆಂಬ ಈ ಮೂರು ತತ್ತ್ವವೆ ಆರಾದ ಭೇದಮಂ ಪೇಳ್ವೆ. ಅದೆಂತೆಂದಡೆ: ಆ ಘನಲಿಂಗದ ಸಹಸ್ರಾಂಶದಲ್ಲಿ ಚಿತ್‍ಶಕ್ತಿ. ಚಿತ್‍ಶಕ್ತಿಯ ಸಹಸ್ರಾಂಶದಿಂದ ಪರಮೇಶ್ವರ. ಪರಮೇಶ್ವರನ ಸಹಸ್ರಾಂಶದಿಂದ ಪರಶಕ್ತಿ. ಆ ಪರಶಕ್ತಿಯ ಸಹಸ್ರಾಂಶದಿಂದ ಸದಾಶಿವನು. ಆ ಸದಾಶಿವನ ಸಹಸ್ರಾಂಶದಿಂದ ಆದಿಶಕ್ತಿ. ಆದಿಶಕ್ತಿಯ ಸಹಸ್ರಾಂಶದಿಂದ ಈಶ್ವರ. ಆ ಈಶ್ವರನ ಸಹಸ್ರಾಂಶದಿಂದ ಇಚ್ಛಾಶಕ್ತಿ. ಇಚ್ಛಾಶಕ್ತಿಯ ಸಹಸ್ರಾಂಶದಿಂದ ಮಾಹೇಶ್ವರ. ಮಾಹೇಶ್ವರನ ಸಹಸ್ರಾಂಶದಿಂದ ಜ್ಞಾನಶಕ್ತಿ. ಆ ಜ್ಞಾನಶಕ್ತಿಯ ಸಹಸ್ರಾಂಶದಿಂದ ರುದ್ರನು. ಆ ರುದ್ರನ ಸಹಸ್ರಾಂಶದಿಂದ ಕ್ರಿಯಾಶಕ್ತಿ. ಆ ಕ್ರಿಯಾಶಕ್ತಿಯ ಸಹಸ್ರಾಂಶದಿಂದ ಈಶಾನ್ಯಮೂರ್ತಿಯಾದನು. ಹೀಂಗೆ ಮೂರು ಆರು ತೆರನಾಯಿತ್ತಯ್ಯ. ಇನ್ನೀ ಲಿಂಗಂಗಳಿಗೆ ಸರ್ವ ಲಕ್ಷಣ ಸಂಪೂರ್ಣವ ಹೇಳಿಹೆನು. ಅದೆಂತೆಂದಡೆ: ಒಂದು ಮೂರ್ತಿ ಸರ್ವತೋಮುಖ ಸರ್ವತೋಚಕ್ಷು, ಸರ್ವತೋಬಾಹು, ಸರ್ವತೋಪಾದ, ಸರ್ವಪರಿಪೂರ್ಣನಾಗಿ ಮಾಣಿಕ್ಯವರ್ಣದ ಧಾತುವಿನಲ್ಲಿ ಭಾವಗಮ್ಯವಾಗಿ ಒಪ್ಪುತಿಪ್ಪುದು. ಅದರಿಂದಲಾದ ಮೂರ್ತಿಗೆ ಏಕ ಶಿರಸ್ಸು, ತ್ರಿಣೇತ್ರ, ಎರಡು ಹಸ್ತ, ಎರಡು ಪಾದ. ಮಿಂಚಿನವರ್ಣದ ಧಾತುವಿನಲ್ಲಿ ಜ್ಞಾನಗಮ್ಯವಾಗಿ ಒಪ್ಪುತಿಪ್ಪುದು. ಅದರಿಂದಲಾದ ಮೂರ್ತಿಗೆ ಎರಡು ಶಿರಸ್ಸು, ಆರು ಕಂಗಳು, ನಾಲ್ಕು ಭುಜ, ಎರಡು ಪಾದ, ಸುವರ್ಣದ ಧಾತುವಿನಲ್ಲಿ ಮನೋಗಮ್ಯವಾಗಿ ಒಪ್ಪುತಿಪ್ಪುದು. ಅದರಿಂದಲಾದ ಮೂರ್ತಿಗೆ ಮೂರು ಮುಖ, ಒಂಬತ್ತು ಕಂಗಳು, ಆರು ಭುಜ, ಎರಡು ಪಾದ, ಶ್ವೇತವರ್ಣದ ಧಾತುವಿನಲ್ಲಿ ಅಹಂಕಾರಗಮ್ಯವಾಗಿ ಒಪ್ಪುತಿಪ್ಪುದು. ಅದರಿಂದಲಾದ ಮೂರ್ತಿಗೆ ನಾಲ್ಕುಮುಖ, ಹನ್ನೆರಡು ಕಂಗಳು, ಎಂಟು ಭುಜ, ಎರಡು ಪಾದ, ಕುಂಕುಮವರ್ಣದ ಧಾತುವಿನಲ್ಲಿ ಬುದ್ಧಿಗಮ್ಯವಾಗಿ ಒಪ್ಪುತಿಪ್ಪುದು. ಅದರಿಂದಲಾದ ಮೂರ್ತಿಗೆ ಪಂಚಮುಖ, ದಶಭುಜ, ದಶಪಂಚನೇತ್ರ, ದ್ವಿಪಾದ, ತನುಯೇಕ, ಶುದ್ಧಸ್ಫಟಿಕವರ್ಣದ ಧಾತುವಿನಲ್ಲಿ ಚಿತ್ತಗಮ್ಯವಾಗಿ ಒಪ್ಪುತಿಪ್ಪುದು. ನಿರಾಕಾರವೇ ಸಾಕಾರವಾಗಿ ತೋರಿತ್ತು. ಸಾಕಾರ ನಿರಾಕಾರವೇಕವೆಂಬುದನು ಸ್ವಾನುಭಾವದಿಂದ ಅನುಭಾವಕೆ ತಂದೆನಯ್ಯ. ಇದು ತನ್ನಿಂದ ತಾನೆ ಸ್ವಯಂಭುವಾದ ಮೂರ್ತಿಯಲ್ಲದೆ ಮತ್ತೊಂದರಿಂದಾದುದಲ್ಲ. ಇಂತೆಸೆವ ಶಿವನ ಮುಖದಲ್ಲಿ ಒಗೆದ ಭೂತಂಗಳಾವವೆಂದಡೆ: ಸದ್ಯೋಜಾತ ಮುಖದಲ್ಲಿ ಪೃಥ್ವಿ. ವಾಮದೇವ ಮುಖದಲ್ಲಿ ಅಪ್ಪು. ಅಘೋರ ಮುಖದಲ್ಲಿ ಅಗ್ನಿ. ತತ್ಪುರುಷ ಮುಖದಲ್ಲಿ ವಾಯು. ಈಶಾನ್ಯ ಮುಖದಲ್ಲಿ ಆಕಾಶ. ಇಂತುದಯವಾದ ಪಂಚಭೂತಂಗಳು ಪಂಚವಿಂಶತಿತತ್ವವಾದ ಭೇದವ ಹೇಳಿಹೆನು. ಆವಾವೆಂದರೆ: ಪೃಥ್ವಿ ಅಪ್ಪು ತೇಜ ವಾಯು ಆಕಾಶ ಇಂತಪ್ಪ ಸ್ಥೂಲಭೂತಿಕವೈದು. ಪ್ರಾಣ ಅಪಾನ ವ್ಯಾನ ಉದಾನ ಸಮಾನವೆಂದು ವಾಯುಗಳೈದು. ವಾಕು ಪಾಣಿ ಪಾದ ಪಾಯು ಗುಹ್ಯವೆಂದು ಕರ್ಮೇಂದ್ರಿಯಂಗಳೈದು. ಶ್ರೋತ್ರ ತ್ವಕ್ಕು ನೇತ್ರ ಜಿಹ್ವೆ ಘ್ರಾಣವೆಂದು ಬುದ್ಧೀಂದ್ರಿಯಂಗಳೈದು. ಮನ ಬುದ್ಧಿ ಚಿತ್ತ ಅಹಂಕಾರವೆಂದು ಕರಣ ಚತುಷ್ಟಯ ನಾಲ್ಕು. ಜೀವನೊಬ್ಬನು; ಅಂತು ಆತ್ಮತತ್ತ್ವವಿಪ್ಪತ್ತೆ ೈದು. ವಿದ್ಯಾತತ್ತ್ವಹತ್ತು ತೆರನು. ಅದೆಂತೆಂದಡೆ: ಶಾಂತಾತೀತ, ಶಾಂತಿ, ವಿದ್ಯೆ, ಪ್ರತಿಷೆ*, ನಿವೃತ್ತಿ ಎಂದು ಕಲಾಶಕ್ತಿಯರೈದು. ಶಿವಸಾದಾಖ್ಯ ಅಮೂರ್ತಿಸಾದಾಖ್ಯ ಮೂರ್ತಿಸಾದಾಖ್ಯ ಕರ್ತೃಸಾದಾಖ್ಯ ಕರ್ಮಸಾದಾಖ್ಯವೆಂದು ಶಿವಾದಿಯಾದ ಸಾದಾಖ್ಯಮೂರ್ತಿಗಳೈದು. ಅಂತು ವಿದ್ಯಾತತ್ವ ಹತ್ತು ತೆರನು. ದ್ವಿತೀಯ ತತ್ತ್ವಮೂವತ್ತೆ ೈದು ತೆರನು. ಇವೆಲ್ಲಾ ತತ್ತ್ವಂಗಳಿಗನುತ್ತರತತ್ತ್ವವಾಗಿ ಶಿವತತ್ತ್ವವೊಂದು. ಅಂತು ತತ್ತ್ವ ಮೂವತ್ತಾರು. ಅಂತು ಆತ್ಮತತ್ತ್ವ ವಿದ್ಯಾತತ್ತ್ವ ಶಿವತತ್ತ್ವವೆಂಬ ತ್ರೆ ೈತತ್ತ್ವ ಮೂವತ್ತಾರು ತೆರನು. ಈ ತತ್ತ್ವಂಗಳಲ್ಲಿಯೇ ತತ್ತ್ವಮಸ್ಯಾದಿ ವಾಕ್ಯಾರ್ಥ ಕಾಣಲಾಯಿತ್ತು. ಅದು ಹೇಂಗೆಂದಡೆ: ತತ್‍ಪದ ತ್ತ್ವಂಪದ ಅಸಿಪದವೆಂದು ಮೂರು ತೆರನು. ತತ್‍ಪದವೆಂದು ತೂರ್ಯನಾಮದ ಶಿವತತ್ತ್ವವು. ತ್ವಂ ಪದವೆಂದು ಇಪ್ಪತ್ತೆ ೈದು ತೆರನಾಗುತಂ ಇದ್ದಂಥಾ ಆತ್ಮತತ್ತ್ವವು. ಅಸಿ ಪದವೆಂದು ಹತ್ತು ತೆರನಾಗುತಂ ಇದ್ದಂಥಾ ವಿದ್ಯಾತತ್ತ್ವವು. ತತ್‍ಪದವೇ ಲಿಂಗ, ತ್ವಂ ಪದವೇ ಅಂಗ, ಅಸಿ ಪದವೇ ಲಿಂಗಾಂಗ ಸಂಬಂಧ. ಈ ತ್ರಿವಿಧ ಪದವನೊಳಕೊಂಡು ನಿಂದುದೇ ಪರತತ್ತ್ವವಯ್ಯಾ, ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.
--------------
ತೋಂಟದ ಸಿದ್ಧಲಿಂಗ ಶಿವಯೋಗಿಗಳು
ಸ್ವಸ್ತಿ ಸಮಸ್ತವಿದ್ಯಾದಿ ಮೂಲವಹ ಋಕ್‍ಯಜುಸ್ಸಾಮಾಥರ್ವಣದಲ್ಲಿ ಅಂತರ್ಗತವಾಗಿಹ ಶ್ರೀರುದ್ರ, ಪಂಚಬ್ರಹ್ಮ, ಶ್ವೇತಾಶ್ವತರ, ಬ್ರಹದಾರಣ್ಯಕ, ಕೇನ, ಈಶ, ಜಾಬಾಲ, ಗರ್ಭ, ಕಾಲಾಗ್ನಿರುದ್ರ, ವಾಜಸನೇಯ, ಶಿವಸಂಕಲ್ಪ, ಬ್ರಹ್ಮಬಿಂದು, ಕಾತ್ಯಾಯನ, ಕಣ್ವ ಇತ್ಯಾದಿ ನಿಖಿಲೋಪನಿಷತ್ತುಗಳನ್ನು ಪ್ರತಿಪಾದಿಸಿ ನೋಡಲು, ನಿತ್ಯಶುದ್ಧ ನಿರ್ಮಲಪರಶಿವನನ್ನು ಸತ್ಯಶುದ್ಧ ಶಿವಾಚಾರಸಂಪನ್ನಭಕ್ತರನಲ್ಲದೆ ವಿಸ್ತರಿಸಿ ಸ್ತುತಿಗೈದುದಿಲ್ಲ. ಅದಕ್ಕೆ ಶಪಥ, ಆ ವೇದಪುರಷರ ಚಿತ್ತವೇ ಸಾಕ್ಷಿ. ಶಿವನ ಶರಣರು ವಾಙõïಮಾನಸಾಗೋಚರರು ಎಂದು ಹೇಳುತ್ತಲಿದೆ ಶ್ರುತಿ. ಅಖಿಲಬ್ರಹ್ಮಾಂಡಂಗಳಿಗೆ ಪಿತಮಾತೆಯಹ ಶಿವನಲ್ಲಿ ಶಿವನ ಶರಣನು ಅವಿರಳನೆಂಬುದಕ್ಕೆ `ಯಥಾ ಶಿವಸ್ತಥಾ ಭಕ್ತಃ' ಎಂಬ ವೇದವಾಕ್ಯವೇ ಪ್ರಮಾಣ. `ನಾಭ್ಯಾ ಅಸೀದಂತರಿಕ್ಷಂ ಶೀಷ್ರ್ಣೋzõ್ಞ್ಯಃ ಸಮವರ್ತತ' ಎಂಬ ಶ್ರುತಿ, ಸಕಲ ಬ್ರಹ್ಮಾಂಡಕೋಟಿಗಳು ಶಿವನ ನಾಭಿಕೂಪದಲ್ಲಿ ಅಡಗಿಹವೆಂದು ಹೇಳಿತ್ತು. `ಭಕ್ತಸ್ಯ ಹೃತ್ಕಮಲಕರ್ಣಿಕಾಮಧ್ಯಸ್ಥಿತೋ[s]ಹಂ ನ ಸಂಶಯಃ ಎಂಬ ಶ್ರುತಿ, ಅಂತಹ ಶಿವನು ಸದ್ಭಕ್ತನೊಳಗಡಗಿಹನೆಂದು ಹೇಳಿತ್ತು. `ಅಘೋರೇಭ್ಯೋ[s]ಥ ಘೋರೇಭ್ಯೋ ಘೋರಘೋರತರೇಭ್ಯಃ ಸರ್ವೇಭ್ಯಃ ಸರ್ವಶರ್ವೆರಭ್ಯೋ ನಮಸ್ತೆ ಅಸ್ತು ರುದ್ರರೂಪೇಭ್ಯಃ ಎಂಬ ಶ್ರುತಿ, ಶಿವನ ಅಘೋರಮೂರ್ತಿಯ ನಿತ್ಯತೇಜೋಮೂರ್ತಿಯೆಂದು ಹೇಳಿತ್ತು. ಜ್ಯೋತಿರ್ಲಿಂಗತ್ವಮೇವಾರ್ಯೇ ಲಿಂಗೀ ಚಾಹಂ ಮಹೇಶ್ವರಿ ತದೇತದವಿಮುಕ್ತಾಖ್ಯಂ ಜ್ಯೋತಿರಾಲೋಕ್ಯತಾಂ ಪ್ರಿಯೇ ಎಂಬ ವಾಕ್ಯ, ಶರಣಸತಿ ಲಿಂಗಪತಿಯಹ ಶಿವನ ಶರಣನೇ ಜ್ಯೋತಿರ್ಲಿಂಗವೆಂದು ಹೇಳಿತ್ತು. ತ್ರ್ಯಂಬಕಂ ಯಜಾಮಹೇ ಸುಗಂಧಿಂ ಪುಷ್ಟಿವರ್ಧನಂ ಉರ್ವಾರುಕಮಿವ ಬಂಧನಾನ್ಮೃತ್ಯೋರ್ಮುಕ್ಷೀಯ ಮಾಮೃತಾತ್ ಎಂಬ ಶ್ರುತಿ, ಶಿವಧ್ಯಾನ ಸ್ತುತಿ ನಿರೀಕ್ಷಣೆ ಪೂಜೆಯಿಂದಲ್ಲದೆ ಜನ್ಮ ಮೃತ್ಯು ಜರಾ ವ್ಯಾಧಿ ಹಿಂಗಿ ಪರಮಸುಖ ಪರಮನಿರ್ವಾಣವಾಗದೆಂದು ಹೇಳಿತ್ತು. `ಅಪವರ್ಗಪದಂ ಯಾತಿ ಶಿವಭಕ್ತೋ ನ ಚಾಪರಃ' ಎಂಬ ವಾಕ್ಯ, ಮುಕ್ತಿ ಶಿವಭಕ್ತಂಗಲ್ಲದೆ ಮತ್ತೊಬ್ಬರಿಗಿಲ್ಲವೆಂದು ಹೇಳಿತ್ತು. `ಋತಂ ಸತ್ಯಂ ಪರಂ ಬ್ರಹ್ಮ ಪುರುಷಂ ಕೃಷ್ಣಪಿಂಗಲಂ ಊಧ್ರ್ವರೇತಂ ವಿರೂಪಾಕ್ಷಂ ವಿಶ್ವರೂಪಾಯ ತೇ ನಮಃ' ಎಂಬ ಶ್ರುತಿ, ಪರಬ್ರಹ್ಮವೆಂಬುದು ಶಿವನಲ್ಲದೆ ಬೇರೆ ಬೇರೆ ಮತ್ತೊಂದು ವಸ್ತುವಿಲ್ಲವೆಂದು ಹೇಳಿತ್ತು. `ಬ್ರಹ್ಮಣಿ ಚರತಿ ಬ್ರಾಹ್ಮಣಃ' ಎಂಬ ವಾಕ್ಯ, ಅಂತಹ ಬ್ರಹ್ಮವ ಚಿಂತಿಸಿ ನಿರೀಕ್ಷಿಸಿ ಸ್ತುತಿಸಿ ಪೂಜಿಸಿ ಪ್ರಸನ್ನಪ್ರಸಾದವ ಪಡೆವ ಸದ್ಭಕ್ತನೇ ಮಹಾಬ್ರಾಹ್ಮಣನೆಂದು ಹೇಳಿತ್ತು. `ವಿಶ್ವತಶ್ಚಕ್ಷುರುತ ವಿಶ್ವತೋ ಮುಖೋ ವಿಶ್ವತಃ ಪಾತ್ ವಿಶ್ವಾಧಿಕೋ ರುದ್ರೋ ಮಹಾಋಷಿಸ್ಸರ್ವೋ ಹಿ ರುದ್ರಃ' ಎಂಬ ಶ್ರುತಿ, ಸಕಲ ಜೀವರ ಶಿವನೆಂದು ಹೇಳಿತ್ತು. `ಭಕ್ತಸ್ಯ ಚೇತನೋ ಹ್ಯಹಂ' ಎಂಬ ವಾಕ್ಯ, ಶಿವಭಕ್ತಂಗೆ ನಾನೇ ಚೈತನ್ಯನೆಂದು ಹೇಳಿತ್ತು. ಇಂತಪ್ಪ ಶಿವಲಿಂಗಾರ್ಚನೆಯ ಮಾಡುವ ಶಿವಭಕ್ತನ ಶ್ರೀಮೂರ್ತಿಗಿನ್ನು ಸರಿಯುಂಟೆರಿ `ವಾಚೋತೀತಂ ಮನೋತೀತಂ ಭಾವಾತೀತಂ ಪರಂ ಶಿವಂ ಸರ್ವಶೂನ್ಯಂ ನಿರಾಕಾರಂ ನಿತ್ಯತ್ವಂ ಪರಮಂ ಪದಂ' ಇಂತಪ್ಪ ಶಿವನಲ್ಲಿ ಅವಿನಾಭಾವರಪ್ಪ ಶರಣರ ಕಂಡಡೆ ಕರ್ಮಕ್ಷಯ, ನೋಡಿದಡೆ ಕಣ್ಗೆ ಮಂಗಳತರ ನಿರುಪಮಸುಖ, ನುಡಿಸಿದಡೆ ಶಿವರಾತ್ರಿ, ಸಂಭಾಷಣೆ ಮಾಡಿದಡೆ ಜನ್ಮಕರ್ಮಬಂಧನನಿವೃತ್ತಿ, ಜೀವನ್ಮುಕ್ತನಹ, ಇದು ನಿತ್ಯ ಕೇಳಿರಣ್ಣಾ. ದರ್ಶನಾತ್ ಶಿವಭಕ್ತನಾಂ ಸಕೃತ್ಸಂಭಾಷಣಾದಪಿ ಅತಿರಾತ್ರಸ್ಯ ಯಜ್ಞಸ್ಯ ಫಲಂ ಭವತಿ ನಾರದ ಎಂದು ನಾರದಬೋಧೆಯಲ್ಲಿ ಈಶ್ವರ ಹೇಳಿದನು. ಇಂತಪ್ಪ ಈಶ್ವರನ ಕಾಣವು ವೇದಂಗಳು. `ಯಜ್ಞೇನ ಯಜ್ಞಮಯಜಂತ ದೇವಾಸ್ತಾನಿ ಧರ್ಮಾಣಿ ಪ್ರಥಮಾನ್ಯಾಸನ್' ಎಂದುದಾಗಿ, ಇಂತು ವೇದಕ್ಕತೀತನಹಂತಹ ಶಿವನ ಶರಣರ ಮಾಹಾತ್ಮೆಯ ಹೊಗಳಲ್ಕೆ ವೇದಕ್ಕೆ ವಶವಲ್ಲ, ಮಂದಮತಿಮಾನವರ ಮಾತಂತಿರಲಿ. ಶಿವಶರಣರ ಮಹಾಮಹಿಮೆಗೆ ನಮೋ ನಮೋ ಎಂಬೆ ಕಾಣಾ ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರ.
--------------
ಉರಿಲಿಂಗಪೆದ್ದಿ
ಆತ್ಮದೃಕ್ಕಿಂದ ಈಶ್ವರನ ತಿಳಿದಲ್ಲದೆ, ಜಾತಿಸ್ಮರತ್ವವ ಕಾಣಬಾರದು; ಜ್ಯೋತಿರ್ಮಯಲಿಂಗದಿಂದೊಗೆದ ಶರಣನ, ಏತರಿಂದ ಕಂಡು ಹೇಳುವಿರಣ್ಣ? ಮಾತಿನಿಂದ ಹೇಳಿಹೆನೆಂದಡೆ, ವಾಚಾತೀತ ಶಿವಶರಣನು. ವಾಙ್ಮನಕ್ಕಗೋಚರವಾದ ಮಹಾಘನ ಪರತತ್ವದಲುದಯವಾದ ಶರಣನ ಮಾತಿಗೆ ತಂದು ನುಡಿವ ಮರುಳುಮಾನವರನೇನೆಂಬೆನಯ್ಯಾ, ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.
--------------
ತೋಂಟದ ಸಿದ್ಧಲಿಂಗ ಶಿವಯೋಗಿಗಳು
ಹಾಡಿ ಹೊಗಳುವ ಜಂಗಮವೆಲ್ಲ ಬ್ರಹ್ಮನ ಸಂತತಿ. ಕಾಡಿ ಬೇಡುವ ಜಂಗಮವೆಲ್ಲ ವಿಷ್ಣುವಿನ ಸಂತತಿ. ಹಾಗವರಿಯದೆ ಹೊಕ್ಕು ಉಂಬುವ ಜಂಗಮವೆಲ್ಲ [ರುದ್ರನ ಸಂತತಿ]. ವ್ಯಾಪಾರವ ಮಾಡುವ ಜಂಗಮವೆಲ್ಲ ಈಶ್ವರನ ಸಂತತಿ. ಇಂತೀ ಅನುಭಾವ ಮಾಡುವ ಜಂಗಮವೆಲ್ಲ ಪರಶಿವನ ಸಂತತಿ. ಮುಕ್ತಿ ಕುಸ್ತಿಯ ಮಾಡುವ ಜಂಗಮವೆಲ್ಲ ಮಹಾಲಿಂಗವೆನಿಸುವದು. ಹಾಡದೆ ಹೊಗಳದೆ ಕಾಡದೆ ಬೇಡದೆ, ಹಾಗವನರಿಯದೆ ಹೊಗದೆ ವ್ಯಾಪಾರ ಮಾಡದೆ, ಭಕ್ತಿಗೆ ತೊಲಗಿ ವ್ಯರ್ಥದಿ ಮುಕ್ತಿ ಕುಸ್ತಿಯನಾಡದೆ, ಭಿಕ್ಷವೆಂಬ ಶಬ್ದದಲ್ಲಿ ಇದಿರಿಟ್ಟು, ಪದಾರ್ಥವ ಲಿಂಗಕರ್ಪಿತವ ಮಾಡುವುದೆ ನಿಜಮುಕ್ತಿ. ಮಹದಾಕಾಶ ಮಹಿಮಾಪತಿಯೆಂಬ ಘನಲಿಂಗಕ್ಕೆ ಅರ್ಪಿತ ಮಾಡುವ ಗುರು. ಅದಾವುದೆಂದಡೆ : ಅದು ಅನಾದಿ ಸಂಜ್ಞೆಯೆಂಬ ಜಂಗಮವು. ಅಂಥ ಜಂಗಮದ ಶ್ರೀಚರಣ ನೆರೆನಂಬಿ, ನೆಟ್ಟನಳಿವಸ್ಥಿರಕಾಯರ ಎನಗೊಮ್ಮೆ ತೋರಿಸಯ್ಯಾ, ಜಂಗಮಲಿಂಗಪ್ರಭುವೆ.
--------------
ಜಂಗಮಲಿಂಗ ಪ್ರಭುವೆ
ಅನುಪಮ ಶರಣನ ನೆನಹಿನ ಕೊನೆಯಲ್ಲಿ ಘನಲಿಂಗವು. ಆ ಘನಲಿಂಗದ ನೆನಹಿನ ಕೊನೆಯಲ್ಲಿ ನಿರವಯವು. ಆ ನಿರವಯದ ನೆನಹಿನ ಕೊನೆಯಲ್ಲಿ ನಿರಾಲಂಬವು. ಆ ನಿರಾಲಂಬದ ನೆನಹಿನ ಕೊನೆಯಲ್ಲಿ ನಿರಾಳವು. ಆ ನಿರಾಳದ ನೆನಹಿನ ಕೊನೆಯಲ್ಲಿ ಆದಿಮಹಾಲಿಂಗವು. ಆ ಆದಿ ಮಹಾಲಿಂಗದ ನೆನಹಿನ ಕೊನೆಯಲ್ಲಿ ಚಿತ್‍ಶಕ್ತಿ. ಆ ಚಿತ್‍ಶಕ್ತಿಯ ನೆನಹಿನ ಕೊನೆಯಲ್ಲಿ ಪರಮೇಶ್ವರನು. ಆ ಪರಮೇಶ್ವರನ ನೆನಹಿನ ಕೊನೆಯಲ್ಲಿ ಪರಾಶಕ್ತಿ. ಆ ಪರಾಶಕ್ತಿಯ ನೆನಹಿನ ಕೊನೆಯಲ್ಲಿ ಸದಾಶಿವನು. ಆ ಸದಾಶಿವನ ನೆನಹಿನ ಕೊನೆಯಲ್ಲಿ ಆದಿಶಕ್ತಿ. ಆ ಆದಿಶಕ್ತಿಯ ನೆನಹಿನ ಕೊನೆಯಲ್ಲಿ ಈಶ್ವರನು. ಆ ಈಶ್ವರನ ನೆನಹಿನ ಕೊನೆಯಲ್ಲಿ ಇಚ್ಛಾಶಕ್ತಿ. ಆ ಇಚ್ಛಾಶಕ್ತಿಯ ನೆನಹಿನ ಕೊನೆಯಲ್ಲಿ ಮಹೇಶ್ವರನು. ಆ ಮಹೇಶ್ವರನ ನೆನಹಿನ ಕೊನೆಯಲ್ಲಿ ಜ್ಞಾನಶಕ್ತಿ. ಆ ಜ್ಞಾನಶಕ್ತಿಯ ನೆನಹಿನ ಕೊನೆಯಲ್ಲಿ ಶ್ರೀರುದ್ರಮೂರ್ತಿ. ಆ ಶ್ರೀರುದ್ರಮೂರ್ತಿಯ ನೆನಹಿನ ಕೊನೆಯಲ್ಲಿ ವಿಷ್ಣುವು. ಆ ವಿಷ್ಣುವಿನ ನೆನಹಿನ ಕೊನೆಯಲ್ಲಿ ಮಹಾಲಕ್ಷ್ಮಿ. ಆ ಮಹಾಲಕ್ಷ್ಮಿಯ ನೆನಹಿನ ಕೊನೆಯಲ್ಲಿ ಬ್ರಹ್ಮನು. ಆ ಬ್ರಹ್ಮನ ನೆನಹಿನ ಕೊನೆಯಲ್ಲಿ ಸರಸ್ವತಿ. ಆ ಸರಸ್ವತಿಯ ನೆನಹಿನ ಕೊನೆಯಲ್ಲಿ ಸಕಲ ಚರಾಚರಂಗಳು. ಇಂತಿವೆಲ್ಲವು ಶರಣನ ನೆನಹುದೋರಿದಲ್ಲಿಯೇ ತೋರುತಿರ್ಪವು, ಆ ಶರಣನ ನೆನಹು ನಿಂದಲ್ಲಿಯೇ ಅಡುಗುತಿರ್ಪುವಾಗಿ, ಅಖಂಡೇಶ್ವರಾ, ನಿಮ್ಮ ಶರಣನು ಘನಕ್ಕೆ ಘನಮಹಿಮ, ವಾಙ್ಮನಕ್ಕಗೋಚರನು, ಉಪಮೆಗೆ ಉಪಮಾತೀತನು ನೋಡಾ.
--------------
ಷಣ್ಮುಖಸ್ವಾಮಿ
ಮಹಿಮೆ ರುದ್ರನ ಹಂಗು, ಧ್ಯಾನ ಈಶ್ವರನ ಹಂಗು, ಜ್ಞಾನ ಸದಾಶಿವನ ಹಂಗು. ಇಂತೀ ಒಂದರ ಹಂಗಿನಲ್ಲಿ ಒಂದನರಿದು ಒಂದ ಕಾಣಿಸಿಕೊಂಡು, ಒಂದ ನಿಧಾನಿಸಿಕೊಂಡು ಒಂದರಲ್ಲಿ ಹೆರೆಹಿಂಗದೆ ನಿಂದುದು ತ್ರಿವಿಧ ಸಂಗದ ಸಗುಣ ಇಂತೀ ತ್ರಿವಿಧವನೊಂದುಗೂಡಿ ಕರ್ಪೂರದ ಸುವಾಸನೆ ಕಿಚ್ಚಿನ ತಪ್ಪಲಲ್ಲಿಯೇ ನಷ್ಟವಾದಂತೆ. ಇಂತೀ ತಾ ದೃಷ್ಟದಲ್ಲಿ ಲಕ್ಷಿಸಿ ಅಲಕ್ಷ ್ಯವಾದುದು ಕೂಗಿನ ಹೊರಗು ಮಹಾಮಹಿಮ ಮಾರೇಶ್ವರಾ.
--------------
ಕೂಗಿನ ಮಾರಯ್ಯ
ಸಹಸ್ರದಳಕಮಲಮಂಟಪದಲ್ಲಿ ಓಂಯೆಂಬ ತಾಯಿ ಒಬ್ಬ ಮಗನ ಹಡೆದು ಸಾಕಿ ಸಲುಹಿ ತನ್ನಂತೆ ಮಾಡಿಕೊಂಡು ತತ್ಪುರುಷಲೋಕದಲ್ಲಿರುವ ಈಶ್ವರನ ಮಗಳ ತಕ್ಕೊಂಡು, ನಿಟಿಲವೆಂಬ ಹಸೆಯಜಗುಲಿಯ ಮೇಲೆ ಮದಲಿಂಗ ಮೊದಲಗಿತ್ತಿಯ ಕುಳ್ಳಿರಿಸಿ, ಅಂತಃಕರಣಚತುಷ್ಟಯಂಗಳೆಂಬ ನಾಲ್ಕು ಕಂಬವ ನಿಲ್ಲಿಸಿ, ಮಹಾಜ್ಞಾನವೆಂಬ ಹಂದರವ ಹೊಂದಿಸಿ, ಪ್ರಾಣಾಪಾನ ವ್ಯಾನ ಉದಾನ ಸಮಾನ ನಾಗ ಕೂರ್ಮ ಕ್ರಕರ ದೇವದತ್ತ ಧನಂಜಯಯೆಂಬ ಹತ್ತು ತೋರಣವ ಕಟ್ಟಿ, ಚಂದ್ರ ಸೂರ್ಯರೆಂಬ ದೀವಿಗೆಯ ಮುಟ್ಟಿಸಿ, ಪಾತಾಳಲೋಕದಲ್ಲಿರ್ಪ ಭಕ್ತನ ಕರೆಸಿ, ಮತ್ರ್ಯಲೋಕದಲ್ಲಿರ್ಪ ಮಹೇಶ್ವರನ ಕರೆಸಿ, ಸ್ವರ್ಗಲೋಕದಲ್ಲಿರ್ಪ ಪ್ರಸಾದಿಯ ಕರೆಸಿ, ತತ್ಪುರುಷಲೋಕದಲ್ಲಿರ್ಪ ಪ್ರಾಣಲಿಂಗಿಯ ಕರೆಸಿ, ಈಶಾನ್ಯಲೋಕದಲ್ಲಿರ್ಪ ಶರಣನ ಕರೆಸಿ, ಈ ಪಂಚಮೂರ್ತಿಗಳಂ ಮಜ್ಜನಂಗೈಸಿ ಕುಳ್ಳಿರ್ದರು ನೋಡಾ ! ಬ್ರಹ್ಮಂಗೆ ತಾಳ, ವಿಷ್ಣುವಿಂಗೆ ವೀಣೆ, ರುದ್ರಂಗೆ ಮೃದಂಗ, ಈಶ್ವರಂಗೆ ಶಂಖ, ಸದಾಶಿವಂಗೆ ಘಂಟೆ, ಈ ಪಂಚಮೂರ್ತಿಗಳು ನಾದವಾಲಗವಂ ಮಾಡುತಿಪ್ಪರು ನೋಡಾ ! ಆದಿಶಕ್ತಿ ಮಂತ್ರಶಕ್ತಿ ಕ್ರಿಯಾಶಕ್ತಿ ಇಚ್ಫಾಶಕ್ತಿ ಜ್ಞಾನಶಕ್ತಿ ಈ ಐವರು ನಾಂಟ್ಯವನಾಡುತ್ತಿಪ್ಪರು ನೋಡಾ ! ನಿಷ್ಪತಿಯೆಂಬ ಬಸವಣ್ಣನ ಮೇಲೆ ಮದಲಿಂಗ ಮೊದಲಗಿತ್ತಿಯ ಕುಳ್ಳಿರಿಸಿ, ಸೋಮಬೀದಿ ಸೂರ್ಯಬೀದಿಯಲ್ಲಿ ಮೆರವಣಿಗೆಯಂ ಮಾಡಿ, ಕ್ರಿಯಾಶಕ್ತಿ ಜ್ಞಾನಶಕ್ತಿ ಇಚ್ಫಾಶಕ್ತಿ ಆದಿಶಕ್ತಿ ಪರಾಶಕ್ತಿ ಈ ಐವರು ನವರತ್ನದ ಹರಿವಾಣಗಳಲ್ಲಿ ಪಂಚಾರ್ತಿಯ ಮೇಲೆ ಏಕಾರ್ತಿಯನಿಕ್ಕಿ ಸಪ್ತದೀಪಂಗಳ ರಚಿಸಿ ಓಂ ನಮೋ ಓಂ ನಮೋ ಶಿವಾಯಯೆಂದು ಬೆಳಗುತಿರ್ಪರು ನೋಡಾ ಝೇಂಕಾರ ನಿಜಲಿಂಗಪ್ರಭುವೆ.
--------------
ಜಕ್ಕಣಯ್ಯ
ವ್ಯಾಸಾದಿಗಳಂತೆ ಶ್ವಾನಜ್ಞಾನಿಗಳಪ್ಪರೆ ಸತ್ಯಶುದ್ಧಶರಣರು ? `ನ ದೇವಃ ಕೇಶವಾತ್ಪರಂ' ಎಂದ ವ್ಯಾಸ, ತನ್ನ ತೋಳುಗಳನೆರಡನು ಹೋಗಲಾಡನೆ ? ಹಿಡಿಯರೆ ಅಂದು ಆಕಾಶಗಣಂಗಳು ? ಮರಳಿ ಈಶ್ವರನಲ್ಲದೆ ದೈವವಿಲ್ಲೆಂದು ಶ್ರುತ್ಯರ್ಥವನರಿದು ದೇವಾರ್ಚನೆಯಂ ಮಾಡಲಾಗಿ ಆ ವ್ಯಾಸನ ಎರಡು ಕರಂಗಳು ಬಂದು, ಅಶೇಷವಹಂತಹ ಚರ್ಮ ಈಶ್ವರನ ಆಲಯದ ಮುಂದೆ ಧ್ವಜಪತಾಕೆಗಳಾಗದೆ ? ಈರೇಳು ಲೋಕವು ಅರಿಯೆ. ಅನಂತಪುರಾಣಾಗಮಗಳಲ್ಲಿ ಕೇಳಿರೆ: ಈಶ್ವರಾರ್ಚನೆಯ ಮಾಡಿ ಮರಳಿ ವಿತಥವಾಗಿ ಪರದಾರಕಿಚ್ಚೈಸಿದಡೆ ಇವಂಗಿದೆ ಪ್ರಿಯವೆಂದು ಆ ಇಂದ್ರನ ಮೈಯೆಲ್ಲಾ ಅನಂಗನಹಂತಹ ಅಂಗವಾಗದೆ ? ಈರೇಳು ಭುವನವರಿಯೆ. ಮರಳಿ ಈಶ್ವರಾರ್ಚನೆಯ ಮಾಡಲು ಆ ಅಂಗದ ಯೋನಿ[ಕೂ]ಪೆಲ್ಲಾ ನಯನಂಗಳಾಗವೆ ಇಂದ್ರಂಗೆ ? ಇದನರಿದು ಶಿವಾರ್ಚನೆಯಂ ಮಾಡಿ ಶಿವನವರಿಗೆ ಧನಸಹಿತ ತ್ರಿವಿಧವ ನಿವೇದಿಸುವುದು ಶಿವಾಚಾರ ಕೇಳಿರಣ್ಣಾ. ಅರಿದರಿದು ಬರಿದೊರೆ ಹೋಗಬೇಡ. ಋಷಿಗಳ ಶಿವಾರ್ಚನೆಯ ವಿಶೇಷವಹಂತಹ ಫಲವ ಕೇಳಿರಣ್ಣಾ: ಕೀಳುಗುಲದ ಋಷಿಗಳ ಕುಲನಾಮಂಗಳ ತೊಡೆದು ಮೇಲುಗುಲನಾಮವ ಕೇಳಿರಣ್ಣಾ. ಅದು ಹೇಗೆಂದಡೆ: ಮುಖದಿಂದುತ್ಪತ್ಯವಾದ ಬ್ರಾಹ್ಮಣನು ಆ ಋಷಿಗಳ ಶಾಖೆಯಾದನು, ಅವರ ಗೋತ್ರವಾದನು. ಶಿವಾಚಾರ ವಿಶೇಷವೊ ? ಕುಲ ವಿಶೇಷವೊ ? ಹೇಳಿರಣ್ಣಾ. `ವರ್ಣಾನಾಂ ಬ್ರಾಹ್ಮಣೋ ಗುರುಃ' ಎಂಬ ಕ್ರೂರಹೃದಯರ ಮಾತ ಕೇಳಲಾಗದು. ಹೋಹೋ ಶಿವನ ಮುಖದಿಂದ ಹುಟ್ಟಿ ಉತ್ತಮವಹಂತಹ ಬ್ರಾಹ್ಮಣಧರ್ಮದಲ್ಲಿ ಜನಿಸಿದಂತಹ ವರ್ಣಿಗಳು ಕ್ಷತ್ರಿಯನ ಭಜಿಸ ಹೇಳಿತ್ತೆ ಈ ವೇದ ? `ಶಿವ ಏಕೋ ಧ್ಯೇಯಃ ಶಿವಂಕರಃ ಸರ್ವಮನ್ಯತ್ಪರಿತ್ಯಜೇತ್' ಎಂದುದಾಗಿ_ ಶಿವನನೆ ಧ್ಯಾನಿಸಿ, ಇತರ ದೇವತೆಗಳ ಬಿಡಹೇಳಿತ್ತಲ್ಲವೆ ? ಅದಂತಿರಲಿ, ಬಡಗಿ ಮಾಚಲದೇವಿಯ ಕುಲಜೆಯ ಮಾಡಿಹೆವೆಂದು ಸತ್ತ ಕಪಿಲೆಯ ಕಡಿದು ಹಂಚಿ ತಿನ್ನ ಹೇಳಿತ್ತೆ ವೇದ ? ಆಗದು ಅವದಿರ ಸಂಗ. ಅಧಮರ ವರ್ಣಾಶ್ರಮಹೀನರ ಕರ್ಮವ ಕಳೆದೆಹೆವೆಂದು ದತ್ತಪುತ್ರರಾಗಿ ಹೊರಸಿ[ನಡಿ]ಯಲಿ ನುಸುಳ ಹೇಳಿತ್ತೇ ಆ ವೇದ ? ಭುಂಜಿಸಿ ಮುಕ್ತಿಯನಿತ್ತಿಹೆವೆಂದಡೆ ಅದಂತಿರಲಿ, ಹಲ ಕೆಲ ಕಾಲ ವಂದಿಸಿದ ಗೌತಮಂಗೆ ಬಾರದೆ ಅಂದು ಗೋವಧೆ ? ಅದಂತಿರಲಿ, ಬ್ರಾಹ್ಮಣರೆ ದೈವವೆಂದು ದಾನಾದಿಗಳ ಮಾಡಿದ ಕರ್ಣನ ಶಿರಕವಚ ಹೋಗದೆ ಜಗವರಿಯೆ ? ವಿಷ್ಣುದೈವವೆಂದರ್ಚಿಸಿದ ಬಲಿ ಬಂಧನಕ್ಕೆ ಬಾರನೆ ಮೂಜಗವರಿಯೆ ? ಶಿಬಿಯ ಮಾಂಸವ ಕೊಂಡು ಇತ್ತ ಮುಕ್ತಿಯ ಕೇಳಿರಣ್ಣಾ. ಅವಂಗೆ ಬಂದ ವಿಧಿಯ ಹೇಳಲಾಗದು. ಅದಂತಿರಲಿ, ಶಿವನ ಭಕ್ತರಿಗೆ ಪರಮಾಣುವಿನಷ್ಟು ಕಾಂಚನವನೀಯೆ ಅಣಿಮಾದ್ಯಷ್ಟಮಹದೈಶ್ವರ್ಯವನೀವರು, ಮೇಲೆ ಮುಕ್ತಿಯಹುದು. ಸಕೃತ್ ಲಿಂಗಾರ್ಚಕೇ ದತ್ವಾ ಸುವರ್ಣಂ ಚಾಣುಮಾತ್ರಕಂ ಭೂಲೋಕಾಧಿಪತಿರ್ಭೂತ್ವಾ ಶಿವ ಸಾಯುಜ್ಯಮಾಪ್ನುಯಾತ್ ಎಂದುದಾಗಿ, ಅದಲ್ಲದೆ ಮತ್ತೆ ದಾನಪರಿಗ್ರಹಂಗಳಂ ಕೊಂಡ ಕೆಲಬರ ಮುಕ್ತರ ಮಾಡಿ ಶಿವಲೋಕಕ್ಕೆ ಕೊಂಡೊಯ್ದುದುಂಟಾದಡೆ ಹೇಳಿರಣ್ಣಾ ? ನಿತ್ಯಂ ಲಿಂಗಾರ್ಚನಂ ಯಸ್ಯ ನಿತ್ಯಂ ಜಂಗಮಪೂಜನಂ ನಿತ್ಯಂ ಗುರುಪದಧ್ಯಾನಂ ನಿತ್ಯಂ ನಿತ್ಯಂ ನ ಸಂಶಯಃ ಇದು ಕಾರಣ, ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರಯ್ಯನ ಶರಣಮಹಾತ್ಮೆಯನ್ನು ಯಜುರ್ವೇದ ಸಾಕ್ಷಿಯಾಗಿ ಪೇಳುವೆ ಕಾಶಿಯ ಕಾಂಡದಲ್ಲಿ.
--------------
ಉರಿಲಿಂಗಪೆದ್ದಿ
ಪೂರ್ವದಲ್ಲಿ ಓಂಕಾರವೆಂಬ ಲಿಂಗದ ಸಂಗದಿಂದ ಪ್ರಣವವೆ ಆದಿಯಾಯಿತ್ತು ನೋಡಾ. ಆ ಆದಿಯ ಸಂಗದಿಂದ ಒಬ್ಬ ಶಿವನಾದ. ಆ ಶಿವನ ಸಂಗದಿಂದ ಈಶ್ವರನಾದ. ಆ ಈಶ್ವರನ ಸಂಗದಿಂದ ರುದ್ರನಾದ. ಆ ರುದ್ರನ ಸಂಗದಿಂದ ವಿಷ್ಣುವಾದ. ಆ ವಿಷ್ಣುವಿನ ಸಂಗದಿಂದ ಬ್ರಹ್ಮನಾದ. ಬ್ರಹ್ಮಂಗೆ ಸರಸ್ವತಿಯಾದಳು, ವಿಷ್ಣುವಿಂಗೆ ಲಕ್ಷ್ಮಿಯಾದಳು, ರುದ್ರಂಗೆ ಕ್ರಿಯಾಶಕ್ತಿಯಾದಳು, ಈಶ್ವರಂಗೆ ಸ್ವಯಂಭೂಶಕ್ತಿಯಾದಳು, ಸದಾಶಿವಂಗೆ ಜ್ಞಾನಶಕ್ತಿಯಾದಳು. ಈ ಐವರ ಸಂಗದಿಂದ ನರರು ಸುರರು ದೇವಾದಿದೇವರ್ಕಳು ಕಿನ್ನರಕಿಂಪುರುಷರು ಗರುಡಗಂಧರ್ವರು ಹುಟ್ಟಿದರು ನೋಡಾ ಝೇಂಕಾರ ನಿಜಲಿಂಗಪ್ರಭುವೆ.
--------------
ಜಕ್ಕಣಯ್ಯ
ಚತುರ್ವೇದನುಭಾವ ಜಂಗಮವೆಲ್ಲ ಬ್ರಹ್ಮನ ಸಂತತಿ. ಹದಿನೆಂಟು ಪುರಾಣದ ಅನುಭಾವ ಮಾಡುವ ಜಂಗಮವೆಲ್ಲ ವಿಷ್ಣುವಿನ ಸಂತತಿ. ಮೂವತ್ತೆರಡು ದಿವ್ಯ ಆಗಮ[ದ ಅನುಭಾವ] ಮಾಡುವ ಜಂಗಮವೆಲ್ಲ ಈಶ್ವರನ ಸಂತತಿ. ಆರು ಶಾಸ್ತ್ರದನುಭಾವ ಮಾಡುವ ಜಂಗಮವೆಲ್ಲ ಸದಾಶಿವನ ಸಂತತಿ. ಇಂತೀ ಎಲ್ಲ ಶಬ್ದವನು ಮುಟ್ಟಿ ಲಿಂಗದನುಭಾವ ಮಾಡುವ ಜಂಗಮವೆಲ್ಲ ಘನನಿತ್ಯ ಕಾಣಾ, ಜಂಗಮಲಿಂಗಪ್ರಭುವೆ.
--------------
ಜಂಗಮಲಿಂಗ ಪ್ರಭುವೆ
ದಾಯೆಂದಡೆ ನಡೆದು ಹೋಯೆಂದಡೆ ನಿಲ್ಲನೆ ಜಗವ ಹೊರೆಯಲೆಂದು ? ಆತನ ಸಾಹಸವ ಬೆಸಗೊಂಬಡೆ ಈಶ್ವರನ ತಾಳುವನಯ್ಯಾ. ಆವರಿಸಿದಡಲ್ಲಾಡಿದತ್ತು ಕೈಲಾಸವು ! ಗಂಡುಗೆದರಿ ಈಡಾಡಿದಡೆ ಅಂಡಜ ಬ್ರಹ್ಮಾಂಡಗಳು ನಿಲುವವೆ ? ಕೆಲೆದು ಕೆದರಿ ಅಟ್ಟಿದೊಡೆ ಮೊರೆಯೆಂಬರಲ್ಲದೆ ಇದಿರಾನುವರುಂಟೆ ? ಅಯ್ಯಾ ನೀನು ಬಿಟ್ಟು ಬೀದಿವರಿದೋಡೆ ಅಟ್ಟಿ ಹಿಡಿವ ಗಂಡುಗರ ನಾ ಕಾಣೆನಯ್ಯಾ. ಸೃಷ್ಟಿಗೀಶ್ವರನಲ್ಲದೆ ಮತ್ತಾರೂ ಇಲ್ಲ. ಗಂಭೀರವೆಂದಡೆ ಇಂಬುಗೊಳ್ವವೆ ಕೊಳಗು ? ಶಂಭುವೇರುವ ವಾಹನವೆಂದೊಡೆ ಬೆನ್ನು ಬೆಂಕಟ್ಟಾಗದೆ ? ಈ ಕೀಳು ಭುವನಕ್ಕೆ. ನಮ್ಮ ಕೂಡಲ[ಚೆನ್ನ]ಸಂಗಮದೇವನಲ್ಲಿ ತೆತ್ತೀಸಾದಿಗಳಿಗುಬ್ಬಸವಯ್ಯ ಎಮ್ಮ ಬಸವರಾಜನು
--------------
ಚನ್ನಬಸವಣ್ಣ
ಕಬ್ಬಿನ ಹೊರಗಣ ಸೋಗೆಯ ಮೆದ್ದು ಪರಿಣಾಮಿಸುವ ಪಶುವಿನಂತೆ, ಹೊರವೇಷವ ಹಲ್ಲಣಿಸಿಕೊಂಡು ಈಶ್ವರೋವಾಚದ ನುಡಿಯ ನುಡಿದು ಬಲ್ಲವರೆನಿಸಿಕೊಳಬಹುದಲ್ಲದೆ, ಈಶ್ವರನ ನಿಲವ ಈ ಉಪಚಾರದಲ್ಲಿ ಕಾಣಬಹುದೆ? ಕಾಣಬಾರದು ಕಾಣಿರಯ್ಯ. ಕಬ್ಬ ಕಡಿದು ಒಳಗಣ ಮಧುರವ ಸ್ವೀಕರಿಸುವ ಮದಗಜದಂತೆ ಅಂತರಂಗದ ನಿಳಯದಲಿ ನಿಜವ ಕಂಡು ನಿವಾಸಿಗಳಾಗಿ ಚಿದಂಗ ಚಿತ್ಪ್ರಾಣ ಚಿಚ್ಛಕ್ತಿ ಚಿದಾಕಾಶವೆನಿಸುವ ಚಿದ್ಫ ್ರಹವೇ ಸ್ಥಳಕುಳವೆಂದರಿದು ಸುಳಿಯಬಲ್ಲರೆ ಸ್ಥಲಜ್ಞರೆಂಬೆ. ಉಳಿದವರೆಲ್ಲಾ ಹುಸಿ ಕಾಣಾ, ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.
--------------
ತೋಂಟದ ಸಿದ್ಧಲಿಂಗ ಶಿವಯೋಗಿಗಳು
ದಾಸಿಯ ಸಂಗವ ಮಾಡುವ ಪಾಪಿಗೆ ಈಶ್ವರನ ಪೂಜಿಸುವ ಆಶೆಯಬೇಕೆ ? ವೇಶಿಯ ಸಂಗವ ಮಾಡುವ ದ್ರೋಹಿಗೆ ಶಿವಪ್ರಸಾದವ ಕೊಂಬ ಆಶೆಯದೇಕೆ ? ಪರಸ್ತ್ರೀ ಸಂಗವ ಮಾಡುವ ಪಂಚಮಹಾಪಾತಕರಿಗೆ ಪರಬ್ರಹ್ಮದ ಮಾತಿನ ಮಾಲೆಯ ಅದ್ವೈತವದೇಕೆ ? ಇಂತಿವರ ನಡೆನುಡಿ ಎಂತಾಯಿತ್ತೆಂದಡೆ, ಗಿಳಿ ಓದಿ ಹೇಳಿ, ತನ್ನ ಮಲವ ತಾ ತಿಂದಂತಾಯಿತ್ತೆಂದ, ಕಲಿದೇವಯ್ಯ.
--------------
ಮಡಿವಾಳ ಮಾಚಿದೇವ
ಆದಿ ಅನಾದಿಯೆಂಬ (ಯೆಂಬುದ?) ಅಂತರಾತ್ಮನಲ್ಲಿ ತಿಳಿಯಲರಿಯದೆ ಆದಿ ದೈವವೆಂದು ಬರಿಯ ಬಹಿರಂಗದ ಬಳಕೆಯನೆ ಬಳಸಿ, ಅನ್ಯ ದೈವಂಗಳನಾರಾಧಿಸಿ ಕೆಡುತ್ತಿಪ್ಪರು ನೋಡಾ. ಅದಕೆ ತಪ್ಪೇನು, ಮಕ್ಕಳಿಗೆ ತಮ್ಮ ಮಾತೆಯೇ ದೈವ. ಮಾತೆಗೆ ತನ್ನ ಪುರುಷನೆ ದೈವ, ಪುರುಷಂಗೆ ತನ್ನ ಪ್ರಭುವೆ ದೈವ. ಪ್ರಭುವಿಗೆ ತನ್ನ ಪ್ರಧಾನನೆ ದೈವ, ಪ್ರಧಾನಂಗೆ ತನ್ನ ರಾಯನೆ ದೈವ. ರಾಯಂಗೆ ತನ್ನ ಲಕ್ಷ್ಮಿಯೆ ದೈವ, ಲಕ್ಷ್ಮಿಗೆ ತನ್ನ ವಿಷ್ಣುವೆ ದೈವ. ವಿಷ್ಣುವಿಗೆ ತನ್ನ ರುದ್ರನೆ ದೈವ, ಆ ರುದ್ರಂಗೆ ತನ್ನ ಈಶ್ವರನೆ ದೈವ. ಈಶ್ವರಂಗೆ ತನ್ನ ಸದಾಶಿವನೆ ದೈವ, ಸದಾಶಿವಂಗೆ ತನ್ನ ಸರ್ವಗತ ಶಿವನೆ ದೈವ. ಸರ್ವಗತ ಶಿವನಿಗೆ ಆಕಾಶಮಹಿಪತಿಯೆಂಬ ಮಹಾಲಿಂಗಕ್ಕೆ ಆದಿ ದೇವರುಳ್ಳಡೆ ಹೇಳಿರೆ, ಇಲ್ಲದಿರ್ದಡೆ ಸುಮ್ಮನೆ ಇರಿರೆ. ಇದು ಕಾರಣ ಷಡುದರುಶನದ ಚರಾಚರಾದಿಗಳೆಲ್ಲರೂ ತಮ ತಮಗಿಷ್ಟ ಕಾಮ್ಯವ ಕೊಡುವುದಕ್ಕೆ ವರವುಳ್ಳ ದೇವರೆಂದು ಬೆರವುತ್ತಿಹರು. ಅದಕ್ಕೆ ತಪ್ಪೇನು ಅವರಿಗಪ್ಪಂಥ, ವರವೀವುದಕ್ಕೆ ಸತ್ಯವುಳ್ಳವನಹುದು. ಆದಡೇನು, ಪ್ರಾಣಕ್ಕೆ ಪರಿಣಾಮವ ಕೊಡಲರಿಯವು. ಅವರ ಕೈಯಲ್ಲಿ ಆರಾಧಿಸಿಕೊಂಬ ದೈವಂಗಳೆಲ್ಲವು. ಪೃಥ್ವಿ ಅಪ್ಪು ತೇಜ ವಾಯು ಆಕಾಶ ಮನವೆಂಬಾರರ ಹಂಗಿನಲ್ಲಿ ಸಿಕ್ಕಿ, ವಿಭೂತಿಯನ್ನಿಟ್ಟು, ರುದ್ರಾಕ್ಷೆಯಂ ತೊಟ್ಟು ಜಪತಪ ಹೋಮ ನೇಮಂಗಳ ಮಾಡಿ ಮಾರಣ ಮೋಹನ ಸ್ತಂಭನ ಉಚ್ಚಾಟನ ಅಂಜನ ಸಿದ್ಧಿ, ಘುಟಿಕಾ ಸಿದ್ಧಿ, ಮಂತ್ರಸಿದ್ಧಿ, ದೂರದೃಷ್ಟಿ ದೂರ ಶ್ರವಣ, ಕಮಲದರ್ಶನ, ತ್ರಿಕಾಲಜ್ಞಾನ, ಪರಕಾಯಪ್ರವೇಶವೆಂಬ ಅಷ್ಟಮಹಾಸಿದ್ಧಿಗಳಂ ಲಿಂಗದಲ್ಲಿ ವರಂಬಡೆದು ತಮ್ಮ ಬೇಡಿದವರಿಗೆ ಕೊಟ್ಟು ತಮ್ಮಿಂದ ಹಿರಿಯರಿಗೆ ನಮಸ್ಕರಿಸಿ, ತಮ್ಮಿಂದ ಕಿರಿಯರಿಗೆ ದೇವರೆಂದು ಬೆರವುತ್ತಿಹರು. ಕಿರಿದುದಿನ ಅವರ ದೇವರೆನ್ನಬಹುದೆ ? ದೇಹಕೇಡಿಗಳ ಸತ್ಯರೆಂದೆನಬಹುದೆ ? ಅಸತ್ಯದಲ್ಲಿ ಅಳಿದವರ ಭಕ್ತರೆಂದೆನಬಹುದೆ ? ಬಹುರೂಪಿನ ಕಪಟಿಗಳ ನಿತ್ಯರೆನಬಹುದೆ ? ದಿನದಿನಕ್ಕೆ ಸತ್ತು ಸತ್ತು ಹುಟ್ಟುವವರ. ಅದೆಂತೆಂದಡೆ: ಬ್ರಹ್ಮನ ಜಾವವೊಂದಕ್ಕೆ ಒಬ್ಬ ಇಂದ್ರನಳಿವ ವಿಷ್ಣುವಿನ ಜಾವವೊಂದಕ್ಕೆ ಒಬ್ಬ ಬ್ರಹ್ಮನಳಿವ ರುದ್ರನ ಜಾವವೊಂದಕ್ಕೆ ಒಬ್ಬ ವಿಷ್ಣುವಳಿವ ಈಶ್ವರನ ಜಾವವೊಂದಕ್ಕೆ ಒಬ್ಬ ರುದ್ರನಳಿವ ಸದಾಶಿವನ ಜಾವವೊಂದಕ್ಕೆ ಒಬ್ಬ ಈಶ್ವರನಳಿವ ಸರ್ವಗತನ ಜಾವವೊಂದಕ್ಕೆ ಒಬ್ಬ ಸದಾಶಿವನಳಿವ ಲಿಂಗ ಶರಣರ ಒಂದು ನಿಮಿಷಕ್ಕೆ ಒಬ್ಬ ಸರ್ವಗತನಳಿವ ಲಿಂಗ ಶರಣರಿಗೆ ಅಳಿವುಳ್ಳಡೆ ಹೇಳಿರೆ ? ಇಲ್ಲದಿರ್ದಡೆ ಸುಮ್ಮನಿರಿರೆ. ಅಂತಪ್ಪ ಮಹಾಲಿಂಗವನು ಶರಣರನು ಅರಿಯದೆ ಷಡುದೇವತೆಗಳು ಮುಖ್ಯವಾದ ಮನು ಮುನಿ ದೇವ ದಾನವ ಮಾನವರೆಲ್ಲರೂ ಆರಿಸಿ ತೊಳಲಿ ಬಳಲುತ್ತಿಪ್ಪರು. ಅದು ಹೇಗೆಂದಡೆ: ಬ್ರಹ್ಮವೇದದಲ್ಲರಸುವನು. ವಿಷ್ಣು ಪೂಜೆಯಲ್ಲರಸುವನು. ರುದ್ರ ಜಪದಲ್ಲರಸುವನು. ಈಶ್ವರ ನಿತ್ಯನೇಮದಲ್ಲರಸುವನು. ಸದಾಶಿವನು ನಿತ್ಯ ಉಪಚಾರದಲ್ಲರಸುವನು. ಸರ್ವಗತ ಶೂನ್ಯದಲ್ಲರಸುವನು. ಗೌರಿ ತಪದಲ್ಲರಸುವಳು, ಗಂಗೆ ಉಗ್ರದಲ್ಲರಸುವಳು. ಚಂದ್ರ ಸೂರ್ಯರು ಹರಿದರಸುವರು. ಇಂದ್ರ ಮೊದಲಾದಷ್ಟದಿಕ್ಪಾಲಕರು ಆಗಮ್ಯದಲ್ಲರಸುವರು ಸಪ್ತ ಮಾತೃಕೆಯರು `ಓಂ ಪಟು ಸ್ವಾಹಾ' ಎಂಬ ಮಂತ್ರದಲ್ಲರಸುವರು. ಸತ್ಯಋಷಿ ದಧೀಚಿ ಗೌತಮ ವಶಿಷ* ವಾಲ್ಮೀಕಿ ಅಗಸ್ತ್ಯ ವಿಶ್ವಾಮಿತ್ರ ಇವರು ಮೊದಲಾದ ಸಪ್ತಋಷಿಯರುಗಳೆಲ್ಲಾ ತಪ, ಯೋಗ, ಆಗಮಂಗಳಲ್ಲಿ ಅರಸುವರು. ಇಂತಿವರೆಲ್ಲರಿಗೆಯೂ ಸಿಕ್ಕಿಯೂ ಸಿಕ್ಕದ ಘನವು ಶುಕ್ಲ ಶೋಣಿತವಿಲ್ಲದ ಕಾಮಿ, ಒಡಲಿಲ್ಲದ ರೂಪು, ತಲೆಯಿಲ್ಲದ ಗಜ, ಬಾಲವಿಲ್ಲದ ಸಿಂಹ, ನಿದ್ರೆಯಿಲ್ಲದ ನಿರಾಳ. ಇಂತೀ ಭೇದಮಂ ಭೇದಿಸಿ ನೋಡಬಲ್ಲಡೆ ಕಣ್ಣ ಮೇಲೆ ಕಣ್ಣುಂಟು. ಮತ್ತಾ ಕಣ್ಣ ತೆರೆದು ಅಮೃತಕಾಯದೃಷ್ಟಿಯಲ್ಲಿ ನೋಡಿದಡೊಂದೂಯಿಲ್ಲ. ನಮ್ಮ ಗುಹೇಶ್ವರ ಲಿಂಗವು ಬಚ್ಚಬರಿಯ ಬಯಲು ನಿಶ್ಚಿಂತ ನಿರಾಳನು
--------------
ಅಲ್ಲಮಪ್ರಭುದೇವರು
ಎಲೆ ವೈದಿಕರಿರಾ, ನಿಮಗೆ ಸತ್ವಬಲ ವೇದವಲ್ಲದೆ ಮತ್ತೇನೂ ಇಲ್ಲ. ಆ ವೇದವೆ ಸ್ವಯಂಭುಯೆಂದು ನುಡಿವಿರಿ, ನಾ ನಿಮಗೆ ತಿಳಿಯ ಪೇಳುವೆ. ಆದಿಸಿದ್ಧಾಂತವಿಡಿದು ವೇದ ಸ್ವಯಂಭುವಲ್ಲ. ಆದಿಮೂಲ ಶಿವನಿಂದಾದವೀ ವೇದಂಗಳು ಕೇಳಿರೆ. ಶಿವನಿಂದಾದ ಮೂವತ್ತಾರುತತ್ತ್ವದೊಳೈದನೆಯದು ಆಕಾಶತತ್ತ್ವವು. ಆ ಆಕಾಶತತ್ತ್ವದಿಂದಾದ ಶಬ ವಿಷಯವು ನಿತ್ಯವೆ ಹೇಳಿರೆ. ಪಂಚಭೂತಂಗಳೊಳಗೊಂದು ಭೂತವಿಷಯವಾ ಶಬ್ಧ. ಆ ಶಬ್ದ ಸಂಬಂಧವಾದ ವೇದಕ್ಕೆ ನಿತ್ಯವೆಲ್ಲಿಯದು ಹೇಳಿರೆ. ಆ ವೇದ ತನಗೆ ತಾನಾದುದೆಂಬಿರೆ. ಎಂಬಿರಾದಡೆ ಪ್ರಳಯಾಂತಕಾಲದಲ್ಲಿ ಅಳಿಯವೀ ವೇದಾದಿ ವಿದ್ಯೆಗಳು. ಜಗತ್ ಸೃಷ್ಟಿಕಾಲದಲ್ಲಿ ಆದಿಕರ್ತಾರ ಸೃಷ್ಟಿ ಸ್ಥಿತಿ ಲಯ ಪ್ರೇರಕಶಿವನಿಂದಾದವು ಕೇಳಿರೆ. ಚರಣಬಹ ಸೂಕ್ತಿಗಳಲ್ಲಿ ಕೇಳ್ದರಿಯಿರೆ. ಋಗ್ವೇದಕ್ಕೆ ದೇಹ ಉರುವರ್ಣ, ಅತ್ರಿಗೋತ್ರ, ಗಾಯತ್ರಿ ಛಂದ, ಅಧಿದೇವತೆ ಬ್ರಹ್ಮ. ಯಜುರ್ವೇದಕ್ಕೆ ಅಬ್ಜದಳಾಯತ ನೇತ್ರ, ಕುಂಚಿತ ಚಿಬುಕು ಮುಂಗೂರ ಮೀಸೆ, ತಾಮ್ರವರ್ಣದೇಹ, ಭಾರದ್ವಾಜಗೋತ್ರ, ತ್ರಿಷ್ಟುಪ್ ಛಂದ, ಅಧಿದೇವತೆ ವಿಷ್ಣು. ಸಾಮವೇದಕ್ಕೆ ದೇಹ ಶ್ವೇತವರ್ಣ, ಕಾಶ್ಯಪಗೋತ್ರ, ಜಗತಿ ಛಂದ, ಅಧಿದೇವತೆ ಈಶ್ವರನು. ಧವಳಶೃಂಗವೆರಡು ಅಥರ್ವಣವೇದಕ್ಕೆ ದೇಹ, ಕೃಷ್ಣವರ್ಣ, ವೈಭಾನುಗೋತ್ರ, ಅನುಷ್ಟುಪ್ ಛಂದ, ಅಧಿದೇವತೆ ಇಂದ್ರನು. ಇಂತು ಶ್ರುತಿಗಳಿಗೆ ಶರೀರವರ್ಣ, ಗೋತ್ರ, ಛಂದ, ಅಧಿದೇವತೆಗಳಿಂತಿರಲು, ತಮಗೆ ತಾವಾದವೆಂದು ನೀವು ನುಡಿವ ಪರಿ ಹೇಗೆ ಹೇಳಿರೆ ವೈದಿಕರಿರಾ. ಇವೇ ನಿತ್ಯವೆಂಬಿರಾದಡೆ ಲಯಗಮನಸ್ಥಿತಿಯುಂಟು ಕೇಳಿರೆ. ಹೃದಯ ದೈವ ಗಾಯಿತ್ರಿ ಸರ್ವವೇದೋತ್ತಮೋತ್ತಮ ಲಿಯಂಕೇ ಮೂದ್ರ್ನಿ ವೈವೇದಾಸಷದೊ ಎನಲು, ಆತ್ಮದೃಷ್ಟಿ ನೇತ್ರದೃಷ್ಟಿಯ ಪ್ರಮಾಣದಿಂ ನಮ್ಮ ಟರುರಿವಿಂದರಿದೆವೆಂಬರೆ, ನಿಮ್ಮ ನೀವರಿಯದವರು ಈ ಜಗದಾದಿಯನೆಂತರಿದಿರೆನಲು, ಜ್ಞಾನಸಾಧನವಹ ಶಾಸ್ತ್ರಾದಿಗಳಿಂದ ಜ್ಞಾನೇಂದ್ರಿಯ ಪ್ರಮಾಣ ನೇತ್ರದಿಂದರಿದವೆನಲು, ನಿಮಗೆ ಜ್ಞಾನೇಂದ್ರಿಯ ಸಾಧನ ನೇತ್ರಗಳೆಲ್ಲಿಯವು. ಈಶ್ವರನ ನಯನಾಶ್ವವೆನಿಸುವ ರವಿಚಂದ್ರಾಗ್ನಿ ತೇಜಸ್ಸಿಂದಲ್ಲದೆ, ಜಾತ್ಯಂಧರು ನೀವು ನಿಮಗೆಲ್ಲಿಯ ದೃಷ್ಟಿವಾಳತನ. ಅತಿಮತಿವಂತರೆನಿಸುವ ದೇವತೆಗಳುಂ ಕಾಣಲರಿಯರು. ಮತಿವಿಕಳರು ನೀವು ಕಾಣಲರಿದಿರೆಂತು ಜಗದಾಗುಹೋಗುಗಳ. ನೋಡಿಯರಿದೆವೆನಲು ಜಗವನಾಡಿ ನೀವು ಮೊನ್ನಿನವರು, ಸಾಮಾನ್ಯಮನುಜರು : ಜಗದನಾದಿಯ ನೀವೆಂತರಿದಿರೆನಲು, ಅದು ಕಾರಣ, ಜಗ ನಿರ್ಮಾಣಕ ಜಗ ಭ್ರಮಣ ಲೀಲಾಲೋಲ ಜಗದಂತರ್ಯಾಮಿ ಜಗತ್ರೈರಕ್ಷಕನೊಬ್ಬನೆಯರಿವ ನಿಮಗರುವಿಲ್ಲೆನಲು, ವೇದ ಶಾಸ್ತ್ರಾಗಮಾದಿಗಳಿಂ ಪ್ರಮಾಣಿಸಿ ಅರಿದೆವೆನಲು, ನಿಮಗೆ ಶ್ರುತಿ ಪ್ರಮಾಣ ಯೋಚನೆಯದೆಲ್ಲಿಯದು `ಜಗತಾಂ ಪತಯೇ ನಮಃ' ಎಂದು ಶ್ರುತಿಯಿರಲು, ಇದು ಕಾರಣ, ವೇದಾದಿಶಾಸ್ತ್ರಂಗಳಿಂದ ನಿಮಗೇನು ಆಗದು, ಪಾಠಕರರುಹಿರಲ್ಲದೆ. ಶ್ರುತಿಃ `ಶಿವೋ ಮಾಯೇವ ಪಿತರೌ' ಎನಲು, ಶಿವನೇ ವೇದಂಗಳಿಗೆ ತಂದೆ ತಾಯಾಗಿರಲು, ಜಗತ್ತಿಂಗೊಡೆಯನಾಗಿರಲು, `ಪಿತಾತದಸ್ಯಮಾ' ಎಂದು ಪಿತನೆ ಶಿವನು ತಾಯಿಪುತ್ರರೆಂದೆನಲು, ವೇದಸ್ವಯಂಭು ಜಗನಿತ್ಯವೆಂಬ ಪರಿಯೆ ಹೇಂಗೆ ಹೇಳಿರೆ. ಪೂರ್ವದಲ್ಲಿ ವೇದಪುರುಷರು, ಶಾಂಭವವ್ರತಿಗಳು, ಪಾಶುಪತವ್ರತಸ್ಥರು, ಶಿವಸಿದ್ಧಾಂತ ಭಕ್ತಿನಿಷಾ* ಸಾವಧಾನವ್ರತರು. ವೇದಾಧಾರಯಂತಿ ಎನಲು, ರುದ್ರಾಕ್ಷಧಾರಣ ಚತುರ್ವಿಧವ್ರತಿಗಳಿಗೆ ಮುಖ್ಯ ತ್ರಿಯಾಯುಷಂ ಜಮದಗ್ನೇಃ ಕಶ್ಯಪಸ್ಯತ್ರಿಯಾಯುಷಂ | ಅಗಸ್ತಸ್ಯ ತ್ರಿಯಾಯುಷಂ ಯದ್ದೇವಾನಾಂ ತ್ರಿಯಾಯುಷಂ | ತನ್ಮೇ ಅಸ್ತು ತ್ರಿಯಾಯುಷಂ' ಎನಲು, ಭಸ್ಮಾವಾಲಿಪ್ತರು ತ್ರಿಪುಂಡ್ರಾಂಕಿತನಿಷ*ರಾಗಿರದೆ, `ವೇದಾಶ್ಚಕಾವಯಂತಿ' ಎನಲು, `ತದಾಸ್ಮಾಮಿ' ಎನಲು, ತದಾಸ್ಮಾಮಿಯನೆ ಶಿವಚರಣಸಲಿಲ ಪ್ರಸಾದ ಸುಭೋಗ ಸಾವಧಾನಿಗಳೆಂದು ತಾವೆ ಹೇಳುತ್ತಿರಲು, ವೇದಾಗಮಶಾಸ್ತ್ರಗಳಿಗೂ ಪಂಚಾಕ್ಷರಿಮಂತ್ರಗಳಲ್ಲಿಯೆ ಉದಯ ಸ್ಥಿತಿಲಯವೆನ್ನುತಿರಲು, ನೀವಾ ವೇದಂಗಳ ಸ್ವಯಂಭೂಯೆಂದೂ ನಿತ್ಯವೆಂದೂ ಜಗವನೆನಬಹುದೆ. ಅದು ಕಾರಣ, ಈ ಜಗಂಗಳನು ತನ್ನ ಲೀಲೆಯಿಂದಲೆ ನಿರ್ಮಿಸುವ ಭವನೆನಿಸಿ, ತನ್ನ ಲೀಲೆಯಿಂದಲೆ ರಕ್ಷಿಸುವ ಮೃಡನಾಗಿ, ತನ್ನ ಲೀಲೆ, ಈ ಲೀಲೆಯಿಂದಲೆ ಸಂಹರಿಸುವ ಹರನಾಗಿ, ಲೀಲಾತ್ರಯರಹಿತನಾಗಿ ಶಿವನೆನಿಸುವ, || ಶ್ರುತಿ || `ಆದಿ ವೇದಸ್ಯ ಶಾಸ್ತ್ರಾಣಿ ಮಂತ್ರ ಪಂಚಾಕ್ಷರೇ ಸ್ಥಿತಾ' ಎಂದುದಾಗಿ, ಇದು ಕಾರಣ, ಉದ್ದೈಸುವ ರಕ್ಷಿಸುವ ಸಂಹರಿಪ ಭವಮೃಡಹರನಾದ ಶಿವನಿರಲು, ನೀವು ವೇದಸ್ವಯಂಭು ಜಗನಿತ್ಯವೆನಲಾಗದು. ||ಶ್ರುತಿ|| `ಪರವೋ ಭವಂತಿ' ಎನಲು, ವೇದ ದೇವತಾ ಸೃಷ್ಟಿಯೆನಲು, ಈಹಿಂಗೆ ವೇದಂಗಳು ಶಿವನಿಂದ ತಮಗೆ ಉದಯಸ್ಥಿತಿಲಯವೆನಲು, ಈ ಜಗ ಸೃಷ್ಟಿಸ್ಥಿತಿಲಯ ಕಾರಣ ಸರ್ವಜ್ಞ ಸರ್ವೇಶ್ವರ ಸರ್ವಕರ್ತು `ಏಕ ಏವ ರುದ್ರೋ ನ ದ್ವಿತೀಯಾಯ ತಸ್ಥೇ' ಎನಲು, ಒಬ್ಬನೆ ಶಿವನು ಎರಡೆನಿಪ ದೇವರಾರುಯಿಲ್ಲವೆಂದರಿದಿರಿ. ವೈದಿಕರಿರಾ, ವೇದಸ್ವಯಂಭುವಲ್ಲ ಶಿವನ ಶಿಶುಗಳು. ಜಗವು ನಿತ್ಯವಲ್ಲ. ಶಿವನ ಆಜ್ಞಾವಶವರ್ತಿಗಳು. ಅಹಂಗಾಗಲದಕ್ಕೇನು ವೈದಿಕಾಚರಣೆಯನಾಚರಿಸುವ ವೈದಿಕ ವ್ರತಿಗಳಿಗೆ ಸಾಧನವೆನಿಸುವ ವೇದಮಂತ್ರಂಗಳೆ ದೈವವೆನಲು, ವೇದಂಗಳೆ ದೈವವಾದಡೆ ಪಕ್ಷೀಶ್ವರನ ಕೈಯ ಸಿಲುಕುವುದೆ. ವೇದವೆ ದೈವವಾದಡೆ ಮುನೀಶ್ವರನಿಂದ ಅಳಿದುಹೋಗಿ ವೇದವ್ಯಾಸನಿಂದ ಪ್ರತಿಷಿ*ತವಹುದೆ. ವೇದವೆ ದೈವವಾದಡೆ ಶುನಕನಪ್ಪುದೆ, ವೇದವೆ ದೈವವಾದಡೆ ದಕ್ಷನಳಿವನೆ. ವೇದವೆ ದೈವವಾದಡೆ ತಮ್ಮಜನ ಶಿರಹೋಹಂದು ಸುಮ್ಮನಿಹವೆ. ವೇದವೆ ದೈವವಾದಡೆ ಕವಿತೆಗೊಳಗಾಹುದೆಯೆಂದು ಎನಲು, `ಆಘ್ರಾಯಘ್ರಾಯಾವದಂತಿ ವೇದ ಶ್ವಾನಶ್ಶನೈಶ್ಚನೈಃ ಯತ್ಸದಾನಿಮಹಾದಿವಾಂತಂ ವಂದೇ ಶಭರೇಶ್ವರಂ' ಇಂತೆಂದುದಾಗಿ, ಇದು ಕಾರಣ, ಶಿವನೇ ಸ್ವಯಂಭು ನಿತ್ಯವೆಂದರಿದ ವಿಪ್ರರೇ ವೈದಿಕೋತ್ತಮರು, ಬಸವಪ್ರಿಯ ಕೂಡಲಚೆನ್ನಸಂಗಯ್ಯ.
--------------
ಸಂಗಮೇಶ್ವರದ ಅಪ್ಪಣ್ಣ
ಇನ್ನಷ್ಟು ... -->