ಅಥವಾ

ಒಟ್ಟು 147 ಕಡೆಗಳಲ್ಲಿ , 31 ವಚನಕಾರರು , 136 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕುರುಹಿನ ರೂಹಿನ ಕೈಯಲ್ಲಿ ದರ್ಪಣವಿದ್ದಲ್ಲಿ ಫಲವೇನು ? ಒಂದಕ್ಕೆ ಜೀವವಿಲ್ಲ , ಒಂದಕ್ಕೆ ತೇಜವಿಲ್ಲ . ಕಾರಣವರಿಯದ ನಿಃಕಾರಣ ಮನುಜರ ಕೈಯಲ್ಲಿ ಲಿಂಗವಿದ್ದು ಫಲವೇನು ? ಅಂಗರಹಿತವಾದ ಸಂಗವನರಿಯರು. ಸಂಗರಹಿತವಾದ ಸುಖವನರಿಯರು. ನಿಸ್ಸಂಗಿ ನಿಂದ ನಿಲವ, ಸಕಳೇಶ್ವರದೇವಾ, ನಿಮ್ಮ ಶರಣ ಬಲ್ಲ .
--------------
ಸಕಳೇಶ ಮಾದರಸ
ತನ್ನೊಳಿಹ ಮೂರು ಲೋಕವ ನುಂಗಿ ಮುಂದೆ ತೋರುತಿಹ ಪರಬ್ರಹ್ಮ ಕಿರಣವು ಆ ಕಿರಣದೊಳು ನೆನವನಡಗಿಸಿ ಸುಷುಪ್ತಿಯ ನಿಲವ ಕಾಣಬಲ್ಲಾತನೆ ಪರಮ ಲಿಂಗೈಕ್ಯ ಕಾಣಾ ಝೇಂಕಾರ ನಿಜಲಿಂಗಪ್ರಭುವೆ.
--------------
ಜಕ್ಕಣಯ್ಯ
ಮರಣವಿಲ್ಲದ ಮಹಿಮನ ನಿಲವ ತನ್ನಲ್ಲಿ ನೋಡಿ, ಶರಣೆಂಬುದಲ್ಲದೆ ಮರೆಯಬಹುದೆ, ತೆರಹಿಲ್ಲದ ನಿಲವು ? ಕಲಿದೇವರದೇವನು ಕರಸ್ಥಲದೊಳೈದಾನೆ ಕಾಣಾ, ಚೆನ್ನಬಸವಣ್ಣ.
--------------
ಮಡಿವಾಳ ಮಾಚಿದೇವ
ಬ್ರಹ್ಮಸ್ಥಾನದಲ್ಲಿ ಜ್ಯೋತಿರ್ಲಿಂಗವಿಪ್ಪುದನರಿತು, ಕ್ರೀವೆರಸಿ ನಿಃಕ್ರೀಯಲ್ಲಿ ನಿಂದು ಕ್ರಮದಿಂದೂಧ್ರ್ವಕ್ಕೆಯ್ದಲು ಮಹಾಲಿಂಗದ ಬೆಳಗು, ಪೃಥ್ವಿಯಂ ಮುಸುಕಿ, ಅಪ್ಪುವನೀಂಟಿ, ಅಗ್ನಿಯಂ ದಹಿಸಿ, ವಾಯುವಂ ನುಂಗಿ, ಆಕಾಶಕ್ಕಳವಲ್ಲದೆ ಸ್ಥಲನಿಸ್ಥಲವನೆಯ್ದಿ ಶೂನ್ಯಾವಸ್ಥೆಯಲ್ಲಿ ನಿಂದ ನಿಲವ ಸೌರಾಷ್ಟ್ರ ಸೋಮೇಶ್ವರಾ, ನಿಮ್ಮ ಶರಣರಲ್ಲದೆ ಅರಿವು ಮರಹನೊಳಕೊಂಡಿಪ್ಪ ಅಜ್ಞಾನಿಗಳೆತ್ತ ಬಲ್ಲರಯ್ಯಾ ?
--------------
ಆದಯ್ಯ
ಗಂಡ ಬಾರನು ಎನ್ನ ತವರೂರಿಗೆ ಹೋಗುವೆವೆನಲು, ನೋಡೆ, ನೋಡೆಲಗವ್ವಾ ಬೇಟೆಯನಾಡುವ ನಾಯತಲೆಯ ಕೊಯ್ದಿಟ್ಟು, ತಾ ಬೇರೆ ಬೇಟಕಾರನಾದ. ನಮ್ಮ ಕಪಿಲಸಿದ್ಧಮಲ್ಲಿಕಾರ್ಜುನ ನೆಲೆಯಲ್ಲಿ ನಿಲವ ಕೊಂಡನು; ಹುಚ್ಚನ ಸಂಗ ನಿಶ್ಚಯವಾಯಿತು.
--------------
ಸಿದ್ಧರಾಮೇಶ್ವರ
ಆದಿ ಅನಾದಿ ನಿತ್ಯಾನಿತ್ಯವ ತಿಳಿಯಲರಿಯದೆ ವಾಯಕ್ಕೆ ಪರಬ್ರಹ್ಮವ ನುಡಿವ ವಾಯುಪ್ರಾಣಿಗಳವರೆತ್ತ ಬಲ್ಲರೋ, ಆ ಪರಬ್ರಹ್ಮದ ನಿಜದ ನಿಲವ ? ಅದೆಂತೆಂದಡೆ ; ಆದಿಯೆ ದೇಹ, ಅನಾದಿಯೆ ನಿರ್ದೇಹ, ಆದಿಯೆ ಸಕಲ, ಅನಾದಿಯೆ ನಿಷ್ಕಲ, ಆದಿಯೆ ಜಡ, ಅನಾದಿಯೆ ಅಜಡ. ಆದಿಯೆ ಕಾಯ, ಅನಾದಿಯೆ ಪ್ರಾಣ. ಈ ಎರಡರ ಯೋಗವ ಭೇದಿಸಿ ತನ್ನಿಂದ ತಾನೆ ತಿಳಿದು ನೋಡಲು, ಆದಿ ಸಂಬಂಧವಪ್ಪ ಭೂತಂಗಳು ನಾನಲ್ಲ. ದಶವಿಧೇಂದ್ರಿಯಂಗಳು ನಾನಲ್ಲ, ದಶವಾಯುಗಳು ನಾನಲ್ಲ. ಅಷ್ಟಮದಂಗಳು, ಸಪ್ತವ್ಯಸನಂಗಳು, ಅರಿಷಡ್ವರ್ಗಂಗಳು, ಷಡೂರ್ಮಿಗಳು, ಷಡ್ಬ್ರಮೆಗಳು, ಷಡ್ಭಾವವಿಕಾರಂಗಳು, ಷಟ್ಕರ್ಮಂಗಳು, ಷಡ್ಧಾತುಗಳು, ತನುತ್ರಯಂಗಳು, ಜೀವತ್ರಯಂಗಳು, ಮಲತ್ರಯಂಗಳು, ಮನತ್ರಯಂಗಳು, ಗುಣತ್ರಯಂಗಳು, ಭಾವತ್ರಯಂಗಳು, ತಾಪತ್ರಯಂಗಳು, ಅಂತಃಕರಣಂಗಳು ಇಂತಿವಾದಿಯಾಗಿ ತೋರುವ ತೋರಿಕೆಯೇನೂ ನಾನಲ್ಲ, ನನ್ನವಲ್ಲ. ಇಂತಿವೆಲ್ಲವೂ ನನ್ನಾಧೀನವಾಗಿಪ್ಪವು ನಾನಿವರಾಧೀನದವನಲ್ಲ. ನಾನು ತೂರ್ಯ ತೂರ್ಯಾತೀತವಪ್ಪ ಸತ್ತು ಚಿತ್ತಾನಂದ ನಿತ್ಯಪರಿಪೂರ್ಣವಸ್ತುವೆ ತನ್ನಿರವೆಂದು ತಿಳಿಯೆ, ಆ ತಿಳಿದ ಮಾತ್ರದಲ್ಲಿಯೇ ಅನಿತ್ಯದ ಬೆಸುಗೆ ಬಿಟ್ಟು ನಿರಾಳದಲ್ಲಿ ನಿಜವನೈದಲರಿಯದೆ ಮತ್ತೆಯುಂ ಭೌತಿಕ ತತ್ವಸಂಬಂಧಿಯಾಗಿ ಇರುತ್ತಿರಲು, ಇಂತೀ ತತ್ವದಾದಿ ತಾನೆಂತೆನಲು ಆ ಪರಬ್ರಹ್ಮವಪ್ಪ ನಿತ್ಯನಿರಾಳ ನಿಃಶೂನ್ಯಲಿಂಗವೆ ತನ್ನ ಲೀಲಾವಿಲಾಸದಿಂದ ತಾನೆ ಸುನಾದ ಬಿಂದು ಪ್ರಕಾಶ ತೇಜೋಮೂರ್ತಿಯಾಗಿ ನಿಂದು ಮಹಾಲಿಂಗವೆಂದೆನಿಸಿತ್ತು. ಆ ಮಹಾಲಿಂಗವೆ ಪಂಚಸಾದಾಖ್ಯವೆಂದೆನಿಸಿತ್ತು. ಆ ಪಂಚಸಾದಾಖ್ಯವೆ ಪಂಚಲಿಂಗ ಪ್ರಕಾಶವೆಂದೆನಿಸಿತ್ತು. ಆ ಪಂಚಲಿಂಗ ಪ್ರಕಾಶವೆ ಪಂಚಮುಖವೆಂದೆನಿಸಿತ್ತು. ಆ ಪಂಚಮುಖದಿಂದವೆ ಪಂಚಾಕ್ಷರಿಯುತ್ಪತ್ತಿ. ಆ ಪಂಚಾಕ್ಷರಿಯಿಂದವೆ ಪಂಚಕಲೆಗಳುತ್ಪತ್ತಿ. ಆ ಪಂಚಕಲೆಗಳಿಂದವೆ ಜ್ಞಾನ ಮನ ಬುದ್ಧಿ ಚಿತ್ತ ಅಹಂಕಾರಗಳುತ್ಪತ್ತಿ. ಆ ಜ್ಞಾನ ಮನ ಬುದ್ಧಿ ಚಿತ್ತ ಅಹಂಕಾರಗಳಿಂದವೆ ಪಂಚತನ್ಮಾತ್ರಂಗಳುತ್ಪತ್ತಿ. ಆ ಪಂಚತನ್ಮಾತ್ರಂಗಳಿಂದವೆ ಪಂಚಭೂತಂಗಳುತ್ಪತ್ತಿ. ಆ ಪಂಚಭೂತಂಗಳೇ ಪಂಚೀಕರಣವನೆಯ್ದಿ ಆತ್ಮಂಗೆ ಅಂಗವಾಯಿತ್ತು. ಆ ಅಂಗಕ್ಕೆ ಜ್ಞಾನೇಂದ್ರಿಯಂಗಳು ಕರ್ಮೇಂದ್ರಿಯಂಗಳು ಪ್ರತ್ಯಂಗವೆಂದೆನಿಸಿತ್ತು. ಇಂತು ದೇಹ ಸಂಬಂಧಮಂ ಶಿವ ತನ್ನ ಚಿದಂಶಿಕನಪ್ಪ ಆತ್ಮಂಗೆ ಸಂಬಂಧಿಸಿದನಾಗಿ, ಆ ಸಂಬಂಧಿಸಿದ ಕಾಯದ ಪೂರ್ವಾಶ್ರಯವು ಎಲ್ಲಿಯಾಯಿತ್ತು ಅಲ್ಲಿಯೇ ಅಡಗಿಸಿ ಆ ಕಾಯದ ಪೂರ್ವಾಶ್ರಯವನಳಿದು ಮಹಾ ಘನಲಿಂಗವ ವೇಧಿಸಿ ಕೊಟ್ಟು, ಶಿವ ತಾನೆ ಗುರುವಾಗಿ ಬಂದು ಮಹಾಘನಲಿಂಗವ ವೇಧಿಸಿ ಕೊಟ್ಟ ಪರಿ ಎಂತೆಂದಡೆ ಆತ್ಮಗೂಡಿ ಪಂಚಭೂತಂಗಳನೆ ಷಡ್ವಿಧ ಅಂಗವೆಂದೆನಿಸಿ, ಆ ಅಂಗಕ್ಕೆ ಆ ಕಲೆಗಳನೆ ಷಡ್ವಿಧ ಶಕ್ತಿಗಳೆಂದೆನಿಸಿ, ಆ ಶಕ್ತಿಗಳಿಗೆ ಷಡ್ವಿಧ ಭಕ್ತಿಯನಳವಡಿಸಿ, ಆ ಭಕ್ತಿಗಳಿಗೆ ಭಾವ ಜ್ಞಾನ ಮನ ಬುದ್ಧಿ ಚಿತ್ತ ಅಹಂಕಾರಂಗಳನೆ ಷಡ್ವಿಧ ಹಸ್ತಂಗಳೆಂದೆನಿಸಿ, ಆ ಹಸ್ತಂಗಳಿಗೆ ಮಹಾಲಿಂಗವಾದಿಯಾದ ಪಂಚಲಿಂಗಗಳನೆ ಷಡ್ವಿಧ ಲಿಂಗಂಗಳೆಂದೆನಿಸಿ, ಆ ಮುಖಂಗಳಿಗೆ ತನ್ಮಾತ್ರಂಗಳನೆ ದ್ರವ್ಯಪದಾರ್ಥಂಗಳೆಂದೆನಿಸಿ, ಆ ದ್ರವ್ಯಪದಾರ್ಥಂಗಳು ಆಯಾಯ ಮುಖದ ಲಿಂಗಂಗಳಲ್ಲಿ ನಿರಂತರ ಸಾವಧಾನದಿಂದ ಅರ್ಪಿತವಾಗಿ ಬೀಗಲೊಡನೆ. ಅಂಗಸ್ಥಲಂಗಳಡಗಿ ತ್ರಿವಿಧ ಲಿಂಗಾಂಗಸ್ಥಲಂಗಳುಳಿದು ಕಾಯ ಗುರು, ಪ್ರಾಣ ಲಿಂಗ, ಜ್ಞಾನ ಜಂಗಮ ಗುರುವಿನಲ್ಲಿ ಶುದ್ಧಪ್ರಸಾದ, ಲಿಂಗದಲ್ಲಿ ಸಿದ್ಧಪ್ರಸಾದ, ಜಂಗಮದಲ್ಲಿ ಪ್ರಸಿದ್ಧಪ್ರಸಾದ. ಇಂತೀ ತ್ರಿವಿಧ ಪ್ರಸಾದವು ಏಕಾರ್ಥವಾಗಿ, ಮಹಾಘನ ಪರಿಪೂರ್ಣಪ್ರಸಾದವಳವಟ್ಟ ಶರಣ ಜ್ಞಾನಿಯಲ್ಲ, ಅಜ್ಞಾನಿ ಮುನ್ನವೇ ಅಲ್ಲ. ಶೂನ್ಯನಲ್ಲ, ನಿಃಶೂನ್ಯ ಮುನ್ನವೇ ಅಲ್ಲ. ದ್ವೈತಿಯಲ್ಲ, ಅದ್ವೈತಿ ಮುನ್ನವೇ ಅಲ್ಲ. ಇಂತೀ ಉಭಯಾತ್ಮಕ ತಾನೆಯಾಗಿ ? ಇದು ಕಾರಣ, ಇದರ ಆಗುಹೋಗು ಸಕೀಲಸಂಬಂಧವ ಚೆನ್ನಮಲ್ಲಿಕಾರ್ಜುನಯ್ಯಾ, ನಿಮ್ಮ ಶರಣರೇ ಬಲ್ಲರು.
--------------
ಅಕ್ಕಮಹಾದೇವಿ
ಕೂಟಗೆಯ ಕೂಳನುಣ್ಣಬಂದವರೆಲ್ಲರೂ ಅಜಾತನ ನಿಲವ ಬಲ್ಲರೆ ? ಬೇಟದ ಕಣ್ಣಿನವರೆಲ್ಲರೂ ಸಕಳೇಶನ ಬಲ್ಲರೆ ? ಈಷಣತ್ರಯವ ಕೂಡುವರೆಲ್ಲರೂ ಪರದೇಶಿಗನ ಕೂಡಬಲ್ಲರೆ ? ಆಶೆಯೆಂಬ ಕೊಳದಲ್ಲಿದ್ದು, ನಿರಾಶೆಯ ನಿರ್ನಾಮವ ಬಲ್ಲರೆ ? ದೋಷದೂರ ನಿರ್ಜಾತನು ನೀನೆ, ನಿಃಕಳಂಕ ಮಲ್ಲಿಕಾರ್ಜುನಾ.
--------------
ಮೋಳಿಗೆ ಮಾರಯ್ಯ
ವೇದಾಗಮಂಗಳು ಹೋದ ಸರಣಿಯಲ್ಲಿ ಹೋದರಲ್ಲದೆ ದ್ವೈತಾದ್ವೈತಕ್ಕೆ ನಿಲುಕದ ನಿಜವ ಕಂಡವರಾರನೂ ಕಾಣೆ. ವಾಣಿಯ ಹಂಗಿನಲ್ಲಿ ಉಲಿದುಲಿದು ಹೋದರಲ್ಲದೆ ಉಲುಹಡಗಿದ ನಿಲವ ಕಂಡವರಾರನೂ ಕಾಣೆ. ತನು ಕರಣ ಭುವನ ಭೋಗಂಗಳ ಕಂಡಲ್ಲದೆ ಸೌರಾಷ್ಟ್ರ ಸೋಮೇಶ್ವರಲಿಂಗದುಳುಮೆಯ ಕಂಡು ಸುಖಿಯಾದವರಾರನೂ ಕಾಣೆ.
--------------
ಆದಯ್ಯ
ಎನ್ನ ಭಕ್ತಿಯ ಶಕ್ತಿಯು ನೀನೆ, ಎನ್ನ ಯುಕ್ತಿಯ ಶಕ್ತಿಯು ನೀನೆ, ಎನ್ನ ಮುಕ್ತಿಯ ಶಕ್ತಿಯು ನೀನೆ. ಎನ್ನ ಮಹಾಘನದ ನಿಲವಿನ ಪ್ರಭೆಯನುಟ್ಟು ತಳವೆಳಗಾದ ಸ್ವಯಜ್ಞಾನಿ ಕೂಡಲಸಂಗಯ್ಯನಲ್ಲಿ ಮಹಾದೇವಿಯಕ್ಕಗಳ ನಿಲವ ಮಡಿವಾಳನಿಂದರಿದು ಬದುಕಿದೆನಯ್ಯಾ, ಪ್ರಭುವೆ.
--------------
ಬಸವಣ್ಣ
ಆರು ಕಂಬದ ಶಿವಾಲಯದ ಮೇಲೆ ಸಾಸಿರದಳದ ಮಂಟಪವ ಕಂಡೆನಯ್ಯ. ಆ ಮಂಟಪದೊಳಗೆ ಒಬ್ಬ ಸತಿಯಳು ನಿಂದಿರುವುದ ಕಂಡೆನಯ್ಯ. ಆ ಸತಿಯಳು ತನ್ನ ನಿಲವ ತಾನೆ ನೋಡಿ ನಿಃಪ್ರಿಯವಾದಳು ನೋಡಾ ಝೇಂಕಾರ ನಿಜಲಿಂಗಪ್ರಭುವೆ.
--------------
ಜಕ್ಕಣಯ್ಯ
ಹೊಳೆವ ಕೆಂಜೆಡೆಗಳ, ಮಣಿಮಕುಟದ, ಒಪ್ಪುವ ಸುಲಿಪಲ್ಗಳ, ನಗೆಮೊಗದ, ಕಂಗಳ ಕಾಂತಿಯ, ಈರೇಳುಭುವನವ ಬೆಳಗುವ ದಿವ್ಯಸ್ವರೂಪನ ಕಂಡೆ ನಾನು. ಕಂಡೆನ್ನ ಕಂಗಳ ಬರ ಹಿಂಗಿತ್ತೆನಗೆ. ಗಂಡಗಂಡರೆಲ್ಲರ ಹೆಂಡಿರಾಗಿ ಆಳುವ ಗರುವನ ಕಂಡೆ ನಾನು. ಜಗದಾದಿ ಶಕ್ತಿಯೊಳು ಬೆರಸಿ ಮಾತನಾಡುವ ಪರಮಗುರು ಚೆನ್ನಮಲ್ಲಿಕಾರ್ಜುನನ ನಿಲವ ಕಂಡು ಬದುಕಿದೆನು
--------------
ಅಕ್ಕಮಹಾದೇವಿ
ಆನೆತ್ತ ಬಲ್ಲೆನಯ್ಯಾ ನಿಮ್ಮ ಭಕ್ತಿಯ ಘನವ ಆನೆತ್ತ ಬಲ್ಲೆನಯ್ಯಾ ನಿಮ್ಮ ಶ್ರೀಪಾದವ ನಿಲವ ಕಾಯದ ಕಳವಳದ ಮರೆಯಲಿದ್ದವರಲ್ಲಿ ನಂಬುಗೆಯಳವಡುವುದೆ ಕೂಡಲಸಂಗಮದೇವಾ ಎನ್ನವಗುಣವ ನೋಡದೆ ಕರುಣದಿಂದ ಭಕ್ತಿಯ ನಿಲವ ತೋರಾ ತಂದೆ.
--------------
ಬಸವಣ್ಣ
ಭಕ್ತನೆಂಬ ಭೂಮಿಯಲ್ಲಿ ಗುರೂಪದೇಶವೆಂಬ ನೇಗಲಿಯಂ ಪಿಡಿದು, ಅಂತಃಕರಣ ಚತುಷ್ಟಯವೆಂಬ ಸೆಳೆಗೋಲಂ ಪಿಡಿದು, ಉತ್ತರ ಕ್ರಿಯೆಯೆಂಬ ಹಂಸನೇರಿ, ದುಷ್ಕರ್ಮದ ಕಾಟದ ಕುಲವಂ ಕಡಿದು, ಅರಿವೆಂಬ ರವಿಕಿರಣದಲ್ಲಿ ಒಣಗಿಸಿ, ಜ್ಞಾನವೆಂಬ ಬೆಂಕಿಯಲ್ಲಿ ಸುಟ್ಟುರುಹಿ, ಆ ಹೊಲನ ಹಸನವ ಮಾಡಿ, ಅದಕ್ಕೆ ಬಿತ್ತುವ ಭೇದವೆಂತೆಂದಡೆ: ಈಡಾ ಪಿಂಗಳ ಸುಷುಮ್ನವೆಂಬ ನಾಳವಂ ಜೋಡಿಸಿ, ತ್ರಿಕೂಟಸ್ಥಾನವೆಂಬ ಬಟ್ಟಲಂ ಬಲಿದು, ಕುಂಡಲಿಯೆಂಬ ಹಗ್ಗವಂ ಬಿಗಿದು, ಹಂಸನೆಂಬ ಎರಡೆತ್ತನ್ನೇ ಹೂಡಿ, ಶಾಂತಿ ನಿರ್ಮಲವೆಂಬ ಮಳೆಗಾಲದ ಮೇಘಮಂ ಸುರಿದು, ಆ ಬೀಜ ಪಸರಿಸಿ, ಪ್ರಜ್ವಲಿಸಿ ಫಲಕ್ಕೆ ಬಂದು ನಿಂತಿರಲು, ಅದಕ್ಕೆ ಒತ್ತುವ ಕಸ ಆವಾವೆಂದಡೆ : ಅಷ್ಟಮದದ ಹಲವಂ ಕಿತ್ತು, ಸಪ್ತವ್ಯಸನದ ಸೆದೆಯಂ ಕಳೆದು, ಮನೋರಥವೆಂಬ ಮಂಚಿಗೆಯನ್ನೇರಿ, ಬಾಲಚಂದ್ರನೆಂಬ ಕವಣಿಯಂ ಪಿಡಿದು, ಪ್ರಪಂಚವೆಂಬ ಹಕ್ಕಿಯಂ ಹೊಡೆದು, ಆ ಭತ್ತ ಬಲಿದು ನಿಂದಿರಲು, ಅದನ್ನು ಕೊಯ್ಯುವ ಭೇದವೆಂತೆಂದಡೆ : ಇಷ್ಟವೆಂಬ ಕುಡುಗೋಲಿಗೆ, ಪ್ರಾಣವೆಂಬ ಹಿಡಿಯ ಜೋಡಿಸಿ, ಭವಭವವೆಂಬ ಹಸ್ತದಿಂದ ಪಿಡಿದು, ಜನನದ ನಿಲವಂ ಕೊಯ್ದು, ಮರಣದ ಸಿವಡಂ ಕಟ್ಟಿ, ಸುಜ್ಞಾನಪಥವೆಂಬ ಬಂಡಿಯ ಹೇರಿ, ಮುಕ್ತಿ ಕೋಟಾರಕ್ಕೆ ತಂದು, ಉನ್ನತವೆಂಬ ತೆನೆಯಂ ತರಿದು, ಷಡುವರ್ಣವೆಂಬ ಬೇಗಾರರಂ ಕಳೆದು, ಅಂಗಜನೆಂಬ ಕಾಮನಂ ಕಣ್ಕಟ್ಟಿ, ಮಂಗಲನೆಂಬ ಕಣದಲ್ಲಿ ಯಮರಾಜನಿಗೆ ಕೋರ ಹಾಕದೆ, ಚಿತ್ರಗುಪ್ತರ ಸಂಪುಟಕ್ಕೆ ಬರಿಸದೆ, ಈ ಶಂಕರನೆಂಬ ಸವಿಧಾನ್ಯವನುಂಡು, ಸುಖಿಯಾಗಿರುತಿರ್ಪ ಒಕ್ಕಲಮಗನ ಎನಗೊಮ್ಮೆ ತೋರು ತೋರಯ್ಯಾ, ಅಮರಗುಂಡದ ಮಲ್ಲಿಕಾರ್ಜುನ ಪ್ರಭುವೆ.
--------------
ಪುರದ ನಾಗಣ್ಣ
ಅಂಗದ ಮೇಲೆ ಲಿಂಗವ ಧರಿಸಿದ ಬಳಿಕ ಸರ್ವಾಂಗಲಿಂಗವಾಗದಿದ್ದರೆ ಆ ಲಿಂಗವ ಏತಕ್ಕೆ ಧರಿಸಲಿ ? ಪ್ರಸಾದ ಕೊಂಡ ಕಾಯ ಪ್ರಸಾದವಾಗದಿದ್ದರೆ ಆ ಪ್ರಸಾದ ಏತಕ್ಕೆ ಕೊಳ್ಳಲಿ ? ಇದು ಕೊಟ್ಟವನ ಗುಣದಿಂದಾದುದು. ಅದನ್ನು ವಿಚಾರಿಸದೆ ಏತಕ್ಕೆ ಲಿಂಗವ ಧರಿಸಿದಿರಿ ? ಏತಕ್ಕೆ ಪ್ರಸಾದವ ಕೊಂಬುವಿರಿ ? ಇದಕ್ಕೆ ಸಾಕ್ಷಿ: 'ಸರ್ವದ್ರವ್ಯವಂಚ ವೇದಯಂ ತದ್ವಾಹಾನ ವಿಖವತೆ' ಇಂತಪ್ಪ ಶ್ರುತಿ ಹುಸಿ ಎನ್ನಿರೊ ವೇಷಧಾರಿಗಳಿರಾ. ನಿಮಗೆ ಪಂಚಾಕ್ಷರ ಸಂಯುಕ್ತವ ಮಾಡಿದ ಗುರುವಿನ ನಡೆಯಲ್ಲಿ ನಿಮ್ಮ ನಡೆ ಎಂತೆಂದಡೆ: ಸಾಕ್ಷಿ: 'ನಾಮಧಾರಕ ಗುರು ನಾಮಧಾರಕಃ ಶಿಷ್ಯಃ | ಅಂಧ ಅಂಧಕಯುಕ್ತಾಃ ದ್ವಿವಿಧಂ ಪಾತಕಂ ಭವೇತ್ ||' ಎಂದುದಾಗಿ, ನಮ್ಮ ಶಿವಗಣಂಗಳ ಸುವಾಚ್ಯ ಸಾಹಿತ್ಯವೆಂದರೆ ಉರಿಕರ್ಪುರ ಸಂಯೋಗವಾದಂತೆ, ವಾಯು ಗಂಧವನಪ್ಪಿದಂತೆ ಶಿವಗಣಂಗಳ ಪಂಚೇಂದ್ರಿಯ ಶಿವನ ಪಂಚಮುಖವಾಗಿದ್ದಿತು. ಪಂಚಾಚಾರವೆ ಪಂಚಬ್ರಹ್ಮ ಪರಿಪೂರ್ಣ ತಾನೆ. ಗುರು, ಲಿಂಗ, ಜಂಗಮ, ತೀರ್ಥಪ್ರಸಾದ ಪಂಚಬ್ರಹ್ಮಮೂರ್ತಿ ನಿಮ್ಮ ಶರಣ. ಇಂತೀ ಶರಣನ ನಿಲವನರಿಯದೆ ನುಡಿವ ವೇಷಧಾರಿಗಳ ಷಡುಸ್ಥಲಬ್ರಹ್ಮಜ್ಞಾನಿಗಳೆಂದರೆ ಕೆಡೆಹಾಕಿ ಮೂಗ ಕೊಯ್ದು, ಇಟ್ಟಂಗಿಯ ತಿಕ್ಕಿ, ಸಾಸಿವೆಯ ಪುಡಿ ತಳೆದು, ನಿಂಬಿಹಣ್ಣು ಹಿಂಡಿ, ಕೈಯಲ್ಲಿ ಕನ್ನಡಿಯ ಕೊಟ್ಟು, ನಿಮ್ಮ ನಿಲವ ನೋಡೆಂದು ಮೂಡಲ ಮುಂದಾಗಿ ಅಟ್ಟದೆ ಬಿಡುವನೆ ನಿಮ್ಮ ಶರಣ, ಚೆನ್ನಯ್ಯಪ್ರಿಯ ನಿರ್ಮಾಯಪ್ರಭುವೆ.
--------------
ಚೆನ್ನಯ್ಯ
ಹಾಸುಹೊಕ್ಕಿನಠಾವ ದಾಸಯ್ಯ ಬಲ್ಲ. ಉಂಬ ಉಡುವ (ಊಡುವ ?) ಠಾವ ಸಿರಿಯಾಳ ಬಲ್ಲ. ಕೊಂಬ ಕೊಡುವ ಠಾವ ಬಲ್ಲಾಳ ಬಲ್ಲ. ಲಿಂಗ ಜಂಗಮದ ಠಾವ ಬಸವಣ್ಣ ಬಲ್ಲ. ರುಚಿಯಠಾವ ಬಂಕಯ್ಯ ಬಲ್ಲ. ನಮ್ಮ ಗುಹೇಶ್ವರನ ನಿಲವ, ಸೊನ್ನಲಿಗೆಯ ಸಿದ್ಧರಾಮಯ್ಯನೆ ಬಲ್ಲ
--------------
ಅಲ್ಲಮಪ್ರಭುದೇವರು
ಇನ್ನಷ್ಟು ... -->