ಅಥವಾ

ಒಟ್ಟು 73 ಕಡೆಗಳಲ್ಲಿ , 33 ವಚನಕಾರರು , 63 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಇಂತಪ್ಪ ವಿಚಾರವ ತಿಳಿಯದೆ ಹತ್ತು ಹೊನ್ನಿಗೆ ಒಂದು ಹೊಲವ ಮಾಡಿ, ಹತ್ತು ಖಂಡಗ ಧಾನ್ಯವ ಬೆಳೆದು, ಹಗೆಯ ಮೆಟ್ಟಿ ಹಗೆಯ ಹಾಕಿ, ಮುಂದೆ ಮಾರಿ ಕಡಬಡ್ಡಿಯ ಕೊಟ್ಟು ತೆಗೆದುಕೊಂಬವರು ಭಕ್ತರೆಂತಪ್ಪರಯ್ಯ ? ಇಂತಪ್ಪವರು ಭಕ್ತರೆಂದರೆ ನಗುವರಯ್ಯ ನಿಮ್ಮ ಶರಣರು ಕಾಡನೊಳಗಾದ ಶಂಕರಪ್ರಿಯ ಚನ್ನಕದಂಬಲಿಂಗ ನಿರ್ಮಾಯಪ್ರಭುವೆ.
--------------
ಕಾಡಸಿದ್ಧೇಶ್ವರ
ಮದ ಮೋಹ ರಾಗ ವಿಷಾದ ತಾಪ ಶೋಕ ವೈಚಿಂತೆಯೆಂಬ ಸಪ್ತ ಮಲವನು, ಸಮತಾಜಲದಿಂದೆ ತೊಳೆದು ಭಾವನಿರ್ಮಲವ ಮಾಡಿ ಪರಶಿವಾನಂದಸ್ವರೂಪವು ಸಂಬಂಧವಾದ ಬಳಿಕ ಭಾವಲಿಂಗೈಕ್ಯ ತಾನೆ ನೋಡಾ. ತನುವ್ಯಸನ ಮನವ್ಯಸನ ಧನವ್ಯಸನ ಉತ್ಸಾಹವ್ಯಸನ ರಾಜ್ಯವ್ಯಸನ ವಿಶ್ವಾಸವ್ಯಸನ ಸೇವಕವ್ಯಸನವೆಂಬ ಸಪ್ತವ್ಯಸನವನು ವಿನಯಜಲದಿಂದೆ ತೊಳೆದು ಮನ ನಿರ್ಮಲ ಮಾಡಿ ಪರಶಿವನ ಚಿತ್ಸ್ವರೂಪ ಸಂಯೋಗವಾದ ಬಳಿಕ ಪ್ರಾಣಲಿಂಗೈಕ್ಯ ತಾನೇ ನೋಡಾ. ರಸ ರುಧಿರ ಮಾಂಸ ಮೇದಸ್ಸು ಅಸ್ತಿ ಮಜ್ಜೆ ಶುಕ್ಲವೆಂಬ ಸಪ್ತಧಾತುವಿನ ಕಳಂಕವ ಕರುಣಜಲದಿಂದೆ ತೊಳೆದು ತನು ನಿರ್ಮಲ ಮಾಡಿ ಪರಶಿವನ ಸತ್ತುರೂಪ ಸಮರಸವಾದ ಬಳಿಕ ಇಷ್ಟಲಿಂಗೈಕ್ಯ ತಾನೆ ನೋಡಾ. ಇದು ಕಾರಣ ಗುರುವಿನಿಂದುದಿಸಿ ಅಷ್ಟಾವರಣದಲ್ಲಿ ಬೆಳೆದು ಮಹಾಲಿಂಗೈಕ್ಯ ಮಹಾತ್ಮನಿಗೆ ಸಕಲ ಪ್ರಕೃತಿಯೊಂದುವೇಳೆ ಬೆರಸಲುಂಟೆ ? ಭೂಮಲದೊಳೆದ ಜಲ ಶರಧಿಯೋಳ್ವೆರಸಿ ಶರಧಿಯಾದಂತೆ ಶರಣ ಜ್ಞಾನಶರಧಿಯೊಳ್ವೆರೆದ ಕರಣವೆಲ್ಲ ಕಿರಣಮಯವಾಗಿ ಕೂಡೆ ಗುರುನಿರಂಜನ ಚನ್ನಬಸವಲಿಂಗವ ಬೆರಸಿ ಬೇರಿಲ್ಲದಿರ್ದವು.
--------------
ದೇಶಿಕೇಂದ್ರ ಸಂಗನಬಸವಯ್ಯ
ಆದಿ ಅನಾದಿಯಿಲ್ಲದತ್ತಣ ದೂರಕ್ಕೆ ದೂರದಲ್ಲಿ ಭಾವಕ್ಕೆ ನಿರ್ಭಾವಕ್ಕೆ ಬಾರದಿರ್ದ ನಿಷ್ಕಳಂಕ ಪರಬ್ರಹ್ಮವೇ ಮುನ್ನ ನೀನು ಶಾಖೆದೋರುವಲ್ಲಿ ನಿನ್ನೊಳಂಕುರಿಸಿ ನಾನು ತಾಮಸ ಮುಸುಂಕಿ ಜನನ ಮರಣಕ್ಕೊಳಗಾಗಿ ಚೌರಾಶಿ ಎಂಬತ್ತುನಾಲ್ಕು ಲಕ್ಷ ಪ್ರಾಣಿಗಳ ಗರ್ಭದಿಂದ ಬಂದು ಬಂದು ಒಮ್ಮೆ ಮಾನವನಪ್ಪಂದಿಗೆ ನಾನುಂಡು ಮೊಲೆಹಾಲು ಸಪ್ತಸಮುದ್ರಕ್ಕೆ ಸರಿಯಿಲ್ಲವಯ್ಯ. ಇಂತಪ್ಪ ಮಾನವ ಜನ್ಮದಲ್ಲಿ ಬಂದ ಬಂದುದು ಗಣಿತಕ್ಕೆ ಬಾರದಯ್ಯ. ಈ ಜನ್ಮದಲ್ಲಿ ಪಿಂಡೋತ್ಪತ್ತಿಯಲ್ಲಿಯೇ ಶರಣಸತಿ ಲಿಂಗಪತಿಯೆಂಬ ಜ್ಞಾನ ತಲೆದೋರಿ ಶರಣವೆಣ್ಣಾಗಿ ಹುಟ್ಟಿದೆನಯ್ಯ. ಎನಗೆ ನಿನ್ನ ಬಯಕೆಯೆಂಬ ಸಿಂಗಾರದ ಸಿರಿಮುಡಿಯಾಯಿತು. ಎನಗೆ ನಿನ್ನ ನೋಡುವೆನೆಂಬ ಮುಗುಳ್ಮೊಲೆ ಮೂಡಿದವು. ಎನಗೆ ನಿನ್ನೊಳು ನುಡಿಯಬೇಕೆಂಬ ಉರವಣೆಯ ಸಂಪದದ ಜವ್ವನ ಕುಡಿವರಿಯಿತ್ತು. ಎನಗೆ ನಿನ್ನನೊಲಿಸಬೇಕೆಂಬ ಸಂಭ್ರಮದ ಕಾಂಚೀಧಾಮ ಕಟಿಸೂತ್ರ ನೇವುರ ನಿಡುಗೊಂಡೆಯವೆಂಬಾಭರಣ ಅನುಲೇಪನ ವಸ್ತ್ರಂಗಳೆನಗೆ ಅಲಂಕಾರವಾಯಿತ್ತು. ಭಕ್ತಿಯೆಂಬ ವಿರಹಾಗ್ನಿ ಎನ್ನ ಹೃದಯಕಮಲದಲ್ಲಿ ಬೆಳೆದು ಬೀದಿವರಿದು ನಿಂತಲ್ಲಿ ನಿಲಲೀಸದಯ್ಯ. ಕುಳಿತಲ್ಲಿ ಕುಳ್ಳಿರಲೀಸದಯ್ಯ. ಮನ ನಿಂದಲ್ಲಿ ಮನೋಹರವಪ್ಪುದಯ್ಯ. ಅಂಗ ಮನ ಪ್ರಾಣ ನೇತ್ರ ಚಿತ್ತಂಗಳೊಳು ಪಂಚಮುಖವೆಂಬ ಪಂಚಬಾಣಂಗಳು ನೆಟ್ಟವಯ್ಯ. ನಾನು ಧರೆಯೊಳುಳಿವುದರಿದು. ಪ್ರೇಮದಿಂ ಬಂದು ಕಣ್ದುಂಬಿ ನೋಡಿ ಮನವೊಲಿದು ಮಾತಾಡಿ ಕರುಣದಿಂ ಕೈವಿಡಿದು ಅಕ್ಕರಿಂದಾಲಂಗಿಸಿ ದಿಟ್ಟಿಸಿ ಬೊಟ್ಟಾಡಿ ಲಲ್ಲೆವಾತಿಂ ಗಲ್ಲವ ಪಿಡಿದು ಪುಷ್ಪ ಪರಿಮಳದಂತೆ ನಾನು ನೀನುಭಯವಿಲ್ಲದಂತೆ ಕೂಡೆನ್ನ ಪ್ರಾಣೇಶನೇ. ಕೂಡಿದಿರ್ದೊಡೆ ಗಲ್ಲವ ಪಿಡಿ. ಪಿಡಿಯದಿರ್ದೊಡೆ ಬೊಟ್ಟಾಡು. ಬೊಟ್ಟಾಡದಿರ್ದೊಡೆ ಆಲಂಗಿಸು. ಆಲಂಗಿಸದಿರ್ದೊಡೆ ಕೈವಿಡಿ. ಕೈವಿಡಿಯದಿರ್ದೊಡೆ ಮಾತಾಡು. ಮಾತಾಡದಿರ್ದೊಡೆ ನೋಡು. ನೋಡದಿರ್ದೊಡೆ ಬಾ. ಬಾರದಿರ್ದೊಡೆ ಪ್ರಮಥಗಣಂಗಳೊಡನೆನ್ನವಳೆಂದು ನುಡಿ. ನುಡಿಯದಿರ್ದೊಡೆ ನಿನ್ನ ಮನದಲ್ಲಿ ನನ್ನವಳೆಂದು ಭಾವಿಸು. ಭಾವಿಸದಿರ್ದೊಡೆ ಪುಣ್ಯ ಕಣ್ದೆರೆಯದು. ಕರ್ಮ ಕಾಂತಿಯಪ್ಪುದು. ಕಾಮ ಕೈದುಗೊಂಬ, ಕಾಲ ಕಲಿಯಪ್ಪ. ಭವಕ್ಕೆ ಬಲ್ಮೆ ದೊರೆವುದು. ಇಂತೀ ಐವರು ಎನಗೆ ಅವಾಂತರದೊಳಗಾದ ಹಗೆಗಳಯ್ಯ, ಇವರೆನ್ನ ತಿಂದುತೇಗಿ ಹಿಂಡಿ ಹಿಪ್ಪೆಯಮಾಡಿ ನುಂಗಿ ಉಗುಳ್ದು ಹಿಂದಣ ಬಟ್ಟೆಗೆ ನೂಂಕುತಿಪ್ಪರಯ್ಯ. ಹೊಗಲಂಜುವೆನಯ್ಯ. ಹೋದರೆ ಚಂದ್ರಸೂರ್ಯಾದಿಗಳುಳ್ಳನಕ್ಕ ನಿನ್ನ ನೆನವ ಮನಕ್ಕೆ ನಿನ್ನ ಕೊಂಡಾಡುವ ಬಾಯ್ಗೆ ನಿನ್ನ ನೋಡುವ ಕಂಗಳಿಗೆ ಸೆರೆ ಸಂಕಲೆಯಪ್ಪುದಯ್ಯ. ಇಂತಿವಂ ತಿಳಿದು ನಿನ್ನ ಮನದೊಳು ನನ್ನವಳೆಂದರೆ ದಿವಾರಾತ್ರೆಯುಳ್ಳನ್ನಬರ ಎನ್ನ ಮನ ಜಿಹ್ವೆ ನೇತ್ರಂಗಳಿಗೆ ಬಂಧನಗಳೆಂಬಿವು ಮುಂಗೆಡುವುವಯ್ಯ. ನಿನ್ನನು ನೆನೆನೆನೆದು ನನ್ನ ಮನ ಬೀಗಿ ಬೆಳೆದು ತಳಿರಾಗಿ ಹೂ ಮಿಡಿಗೊಂಬುದಯ್ಯ. ನಿನ್ನ ಹಾಡಿ ಹಾಡಿ ನನ್ನ ಜಿಹ್ವೆ ಅಮೃತಸಾಗರದೊಳೋಲಾಡುತ್ತಿಪ್ಪುದಯ್ಯ. ನಿನ್ನಂ ನೋಡಿ ನೋಡಿ ಕಂಗಳು ನಿಜಮೋಕ್ಷಮಂ ಪಡೆವುವಯ್ಯ. ನಾನು ಈರೇಳು ಲೋಕಕ್ಕೆ ಬರುವ ಹಾದಿ ಹಾಳಾಗಿಪ್ಪುದಯ್ಯ. ಶತ್ರುಗಳೆನಗೆ ಮಿತ್ರರಪ್ಪರಯ್ಯ. ಭವದ ಬಳ್ಳಿ ಅಳಿವುದು. ಕಾಲಿನ ಕಲಿತನ ಕೆಡುವುದು. ಕಾಮನ ಕೈದು ಖಂಡಿಸುವುದು. ಕರ್ಮದ ಕಾಂತಿ ಕರಗುವುದು. ಪುಣ್ಯದ ಕಣ್ಣು ಬಣ್ಣಗೆಡುವುದಯ್ಯ. ನಿನಗೊಲಿದವರ ನಿನ್ನಂತೆ ಮಾಡು ಕೃಪಾಕರನೆ. ನಿನಗೆ ಮೆಚ್ಚಿದೆನಯ್ಯ. ನಿನ್ನ ಮೆಚ್ಚಿಸಿಕೊಳ್ಳಲರಿಯದ ಮುಗ್ಧವೆಣ್ಣಿನ ಪತಿಭಕ್ತಿಯಂ ಸಾಧಿಸು. ಎನ್ನವಸ್ಥೆಯಂ ಲಾಲಿಸು, ನಿನ್ನ ಶ್ರೀಪಾದಪದ್ಮದೊಳಗೆನ್ನನೊಡಗೂಡಿಸು. ಎನ್ನ ಬಿನ್ನಪಮಂ ಲಾಲಿಸು, ಘನಲಿಂಗಿಯ ಮೋಹದ ಚೆನ್ನಮಲ್ಲಿಕಾರ್ಜುನಾ.
--------------
ಘನಲಿಂಗಿದೇವ
ಪಾಪಿ ನಾನೊಂದು ಪಾಪವ ಮಾಡಿದೆ. ಆ ಪಾಪವೆನಗೆ ಸತಿಸುತರಾಗಿ ಕಾಡುತ್ತಿದೆ. ಪಾಪವನೆ ಬಿತ್ತಿ, ಕೋಪವನೆ ಬೆಳೆದು, ಈ ಪರಿಯಲಿ ದಿನಂಗಳು ಹೋದವಲ್ಲ. ಎನಗಿನ್ನೇನು ಪರಿ ಹೇಳಾ, ದೇವರಾಯ ಸೊಡ್ಡಳಾ ?
--------------
ಸೊಡ್ಡಳ ಬಾಚರಸ
ಅಮೃತದೊಳಗೆ ಜನಿಸಿ ಅಮೃತದೊಳಗೆ ವರ್ತಿಸುವ ಅಮೃತದೇಹಿಗೆ ಹಸಿವು ತೃಷೆಯೆ ? ಆ ಅಮೃತವೆ ಆಹಾರ, ಆ ಅಮೃತವೆ ಸೇವನೆ, ಬೇರೊಂದು ವಸ್ತುವುಂಟೆ ? ಇಲ್ಲ. ಅಮೃತವೇ ಸರ್ವಪ್ರಯೋಗಕ್ಕೆ. ಇದಕ್ಕೆ ಕಟ್ಟಳೆಯುಂಟೆ ? ಕಾಲವುಂಟೆ ? ಆಜ್ಞೆ ಉಂಟೆ ? ಬೇರೆ ಕರ್ತರುಂಟೆ ? ಇಲ್ಲ. ಮನವೇ ಮೇರೆ, ಪರಿಣಾಮವೇ ಅವಧಿ ನೋಡಾ. ಶ್ರೀಗುರುಲಿಂಗದಲ್ಲಿ ಜನಿಸಿ, ಶಿವಲಿಂಗದಲ್ಲಿ ಬೆಳೆದು ಜಂಗಮಲಿಂಗದಲ್ಲಿ ವರ್ತಿಸಿ, ಪ್ರಸಾದಲಿಂಗದಲ್ಲಿ ಪರಿಣಾಮಿಸಿ, ಗುರು ಲಿಂಗ ಜಂಗಮ ಪ್ರಸಾದ ಒಂದೆಂದರಿದು ಆ ಚತುರ್ವಿಧ ಏಕವಾದ ಲಿಂಗವೇ ಪ್ರಾಣ, ಪ್ರಾಣವೇ ಲಿಂಗ ಲಿಂಗವೇ ಅಂಗ, ಅಂಗವೆ ಲಿಂಗವಾದ ಲಿಂಗಸ್ವಾಯತವಾದ ಲಿಂಗೈಕ್ಯಂಗೆ ಜಪ ಧ್ಯಾನ ತಪಕ್ಕೆ ಅರ್ಚನೆಗೆ ಪೂಜನೆಗೆ ಆಗಮವುಂಟೆ ? ಕಾಲವುಂಟೆ ? ಕರ್ಮವುಂಟೆ ? ಕಲ್ಪಿತವುಂಟೆ ? ಇಲ್ಲ. ಸರ್ವವೂ ಲಿಂಗಮಯ. ಆ ಲಿಂಗವಂತಂಗೆ ನಡೆದುದೇ ಆಗಮ, ಪೂಜಿಸಿದುದೇ ಕಾಲ ಮಾಡಿದುದೇ ಕ್ರಿಯೆ, ನುಡಿದುದೇ ಜಪ, ನೆನೆದುದೇ ಧ್ಯಾನ ವರ್ತಿಸಿದುದೇ ತಪಸ್ಸು. ಇದಕ್ಕೆ ಅವಧಿಯುಂಟೆ ? ಮೇರೆಯುಂಟೆ ? ಇಲ್ಲ. ಮನವೇ ಮೇರೆ, ಪರಿಣಾಮವೇ ಅವಧಿ ನೋಡಾ. ಪೃಥ್ವಿ, ಅಪ್ಪು, ತೇಜ, ವಾಯು, ಆಕಾಶ, ರವಿ, ಶಶಿ, ಆತ್ಮ ಮನೋವಾಕ್ಕಾಯ ಹೊನ್ನು ಹೆಣ್ಣು ಮಣ್ಣು ಮೊದಲಾದ ಸರ್ವಪದಾರ್ಥವನರ್ಪಿಸಿ, ಗುರು ಲಿಂಗ ಜಂಗಮದ ಪ್ರಸನ್ನತೆಯ ಪಡೆದ ಮಹಾಪ್ರಸಾದಿಗೆ ಸರ್ವವೂ ಪ್ರಸಾದವಲ್ಲದೆ ಮತ್ತೊಂದಿಲ್ಲ. ಆ ಪ್ರಸಾದಿಗೆ ಪದಾರ್ಥವೆಂಬ ಪ್ರಸಾದವೆಂಬ ಭೇದವುಂಟೆ ? ಅರ್ಪಿತವೆಂಬ ಅನರ್ಪಿತವೆಂಬ ಸಂದೇಹವುಂಟೆ ? ಕೊಡುವಲ್ಲಿ ಕೊಂಬಲ್ಲಿ ಸೀಮೆಯುಂಟೆ ? ನಿಸ್ಸೀಮಪ್ರಸಾದಿಗೆ ಸರ್ವವೂ ಪ್ರಸಾದ. ಆ ಭೋಗಕ್ಕೆ ಮೇರೆ ಉಂಟೆ ? ಅವಧಿಯುಂಟೆ ? ಇಲ್ಲ. ಮನವೇ ಮೇರೆ, ಪರಿಣಾಮವೇ ಅವಧಿ ನೋಡಾ. ವೇದ ಶಾಸ್ತ್ರ ಆಗಮ ಪುರಾಣ ಮೊದಲಾದ ಸರ್ವವಿದ್ಯಂಗಳ ತಾತ್ಪರ್ಯ ಮರ್ಮ ಕಳೆಗಳನರಿದ ಮಹಾಜ್ಞಾತೃವಿಂಗೆ ಆ ಮಹಾಜ್ಞಾನವೇ ದೇಹ, ಆ ಮಹಾಜ್ಞೇಯವೇ ಪ್ರಾಣ. ಈ ಮಹತ್ತಪ್ಪ ಜ್ಞಾತೃ ಜ್ಞಾನ ಜ್ಞೇಯ ಒಂದಾದ ಮಹಾಬೆಳಗಿನ ಸುಖಸ್ವರೂಪಂಗೆ ಮತ್ರ್ಯ ಸ್ವರ್ಗ ದೇವಲೋಕವೆಂಬ ಫಲಪದದಾಸೆಯುಂಟೆ ? ಇಲ್ಲ. ನಿರಂತರ ತೇಜೋಮಯ ಸುಖಸ್ವರೂಪನು ವಿದ್ಯಾಸ್ವರೂಪನು ನಿತ್ಯಾನಂದಸ್ವರೂಪನು. ಆ ಮಹಾಮಹಿಮನ ಮಹಾಸುಖಕ್ಕೆ ಅವಧಿಯುಂಟೆ ? ಮೇರೆಯುಂಟೆ ? ಇಲ್ಲ. ಮನವೇ ಮೇರೆ, ಪರಿಣಾಮವೇ ಅವಧಿ ನೋಡಾ. ಆ ಮಹಾನುಭಾವಿ ತಾನೆ ಕೇವಲ ಜ್ಯೋತಿರ್ಮಯಲಿಂಗವಯ್ಯಾ ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರ
--------------
ಉರಿಲಿಂಗಪೆದ್ದಿ
ಪ್ರಥಮ ಮೂರು, ಆಶ್ರಯ ನಾಲ್ಕು, ಸ್ಥಲವಾರು, ಯೋಗವೆಂಟು, ಸಂಯೋಗವೆರಡು, ವಿಯೋಗವೊಂದು, ವಿಭೇದವೆರಡು, ಭೇದವೊಂದು, ಅರಿಕೆಯೆರಡು ಅರಿದುದೊಂದು ಆಕಾಶ ಮೂರು ಅವಾಕಾಶವೆರಡು, ಮಹದಾಕಾಶ ನಾಲ್ಕು. ಇಂತಿವೆಲ್ಲವೂ ಮಹಾಪ್ರಕಾಶದ ಪ್ರಭೆ ಪ್ರಜ್ವಲವಾಗಿ ಉಭಯನಾಮರೂಪ ತಾಳ್ದು, ವಂಶ ಮೂರರಲ್ಲಿ ಅಳವಟ್ಟು ಸ್ಥಲವಾರರಲ್ಲಿ ಬೆಳೆದು, ಕುಳವೆಂಟರಲ್ಲಿ ಓಲೈಸಿ ಕುಳ ನಾಲ್ಕರಲ್ಲಿ ಒಕ್ಕಿ, ಫಲ ಮೂರರಲ್ಲಿ ಅಳೆದು ಹಗ ಒಂದರಲ್ಲಿ ತುಂಬಿತ್ತು. ಇಂತೀ ವಿವಿಧ ಸ್ಥಲಂಗಳ ಹೊಲಬನರಿತು ವರ್ತಕಕ್ಕೆ ಕ್ರೀ ಶುದ್ಧ, ಅರಿವಿಂಗೆ ಬಿಡುಗಡೆ ಶುದ್ಧ ಬಿಡುಗಡೆ ಎರಡು ಏಕವಾದಲ್ಲಿ ಸ್ಥಲ ನಿರ್ವಾಹ. ಶಂಭುವಿನಿಂದಿತ್ತ ಸ್ವಯಂಭುವಿನಿಂದತ್ತ ಅತಿಬಳ ನೋಡಾ. ಮಾತುಳಂಗ ಮಧುಕೇಶ್ವರನು. || 59 ||
--------------
ದಾಸೋಹದ ಸಂಗಣ್ಣ
ಲಿಂಗದಿಂದುದಯ ನಮಗೆ, ಹೇಗಿರ್ದಡು ಲಿಂಗದಿಂದ ಬೆಳಿಗೆ ಎಂದು ಹೆಡಕೆತ್ತಿ ಆಚರಿಸಲಾಗದು. ಸತ್ತು ಹುಟ್ಟಿ ಬೆಳೆದು ಬೆಳೆಯೊಳು ಸುಯಿಧಾನಿ ಸುಖನರಿದು ಮರೆದು. ಮಡಿಯಬಲ್ಲ ಮಹಿಮಂಗಲ್ಲದಿಲ್ಲವೈಕ್ಯಪದ ಗುರುನಿರಂಜನ ಚನ್ನಬಸವಲಿಂಗದಲ್ಲಿ.
--------------
ದೇಶಿಕೇಂದ್ರ ಸಂಗನಬಸವಯ್ಯ
ಸಪ್ತದ್ವೀಪದ ಮಧ್ಯದಲ್ಲಿ ಇಪ್ಪತ್ತೆ ೈದು ಕೊನೆಯ ವೃಕ್ಷವ ಕಂಡೆನಯ್ಯ. ಎಂಟರಾದಿಯಲ್ಲಿ ನಿಂದು ಏಳರ ನೀರನಲ್ಲಿ ಬೆಳೆದು ಆರರ ಭ್ರಮೆಯಲ್ಲಿ ಮುಳುಗಿ ಮೂಡುತ್ತಿಹುದು. ಹತ್ತರ ಹಾದಿಯಲ್ಲಿ ಹರಿದು ಹಬ್ಬಿ ಕೊಬ್ಬುವುದಯ್ಯ. ಎಲೆ ಹೂವು ಫಲವು ಹಲವಾಗಿಪ್ಪುದಯ್ಯ. ಸಪ್ತದ್ವೀಪವೂ ಅಲ್ಲ; ಇಪ್ಪತ್ತೆ ೈದು ಕೊನೆಯೂ ಅಲ್ಲ; ಎಂಟಲ್ಲ, ಏಳಲ್ಲ, ಆರರ ಭ್ರಮೆಯಲ್ಲ; ಹತ್ತರ ಹಾದಿಯಲ್ಲಿ ಹರಿದು ಹಬ್ಬಿ ಕೊಬ್ಬುವುದಿಲ್ಲ; ಎಲೆ ಹೂವು ಫಲವು ಹಲವಾಗಿ ತೋರುವ ತೋರಿಕೆ ತಾನಲ್ಲವೆಂದು ನಡುವಣ ವೃಕ್ಷದ ನೆಲೆಯ ನಿರ್ಣಯವ ತಿಳಿದಾತನಲ್ಲದೆ ಸಲೆ ಶಿವಶರಣನಲ್ಲ ಕಾಣಾ, ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.
--------------
ತೋಂಟದ ಸಿದ್ಧಲಿಂಗ ಶಿವಯೋಗಿಗಳು
ಅಂದೊಮ್ಮೆ ಧರೆಯ ಮೇಲೆ ಬೀಜವಿಲ್ಲದಂದು ಬಸವನೆಂಬ ಗಣೇಶ್ವರನು ಭೋಂಕರಿಸಿ ಕೆಲೆದಡೆ ಬೀಜ ಉತ್ಪತ್ತಿಯಾಯಿತ್ತು. ಅದೆನೆ ಬಿತ್ತಿ ಅದನೆ ಬೆಳೆದು ಅಟ್ಟಟ್ಟು ಲಿಂಗಕ್ಕೆ ಬೋನವ ಮಾಡಿ- ನಾಗಲೋಕದ ನಾಗಗಣಂಗಳಿಗೆಯೂ ಬಸವಣ್ಣನ ಪ್ರಸಾದ, ಮತ್ರ್ಯಲೋಕದ ಮಹಾಗಣಂಗಳಿಗೆಯೂ ಬಸವಣ್ಣನ ಪ್ರಸಾದ, ದೇವಲೋಕದ ದೇವಗಣಂಗಳಿಗೆಯೂ ಬಸವಣ್ಣನ ಪ್ರಸಾದ, ಎಲೆ ಕೂಡಲಚೆನ್ನಸಂಗಮದೇವಾ, ನಿಮ್ಮಾಣೆ, ನಿಮಗೂ ಎನಗೂ ಬಸವಣ್ಣನ ಪ್ರಸಾದ !
--------------
ಚನ್ನಬಸವಣ್ಣ
ಲಿಂಗಕ್ಷೇತ್ರವೆಂಬ ಪವಿತ್ರಸ್ಥಲದಲ್ಲಿ, ಪ್ರಸಾದಿ ಭಕ್ತಿ ಬೀಜದ ಬಿತ್ತಿ ಶುದ್ಧ ಪದಾರ್ಥವ ಬೆಳೆದು, ಆ ಪದಾರ್ಥವ ಲಿಂಗಾರ್ಪಿತವ ಮಾಡಿ ಆ ಪ್ರಸಾದವ ತಾನಿಲ್ಲದೆ ಭೋಗಿಸಿ ನಿತ್ಯಸುಖಿಯಾದನು, ನಿಜಗುರು ಸ್ವತಂತ್ರಸಿದ್ಧಲಿಂಗೇಶ್ವರ ನಿಮ್ಮ ಪ್ರಸಾದಿ.
--------------
ಸ್ವತಂತ್ರ ಸಿದ್ಧಲಿಂಗ
ಆದಿ ಅನಾದಿಯೆಂಬವು ನಾದಕ್ಕೆ ಬಾರದ ಮುನ್ನ, ಶೂನ್ಯ ನಿಃಶ್ಶೂನ್ಯ ಸುರಾಳವೆಂಬವು ಸುಳುಹುದೋರದ ಮುನ್ನ, ಬೆಳಗು ಕತ್ತಲೆಯಿಲ್ಲದ ಮುನ್ನ, ಅಳಿವು ಉಳಿವು ಸುಳುವು ಸೂತ್ರ ಜಂತ್ರ ಜಡ ಅಜಡವಿಲ್ಲದ ಮುನ್ನ, ಕಡೆ ನಡು ಮೊದಲಿಲ್ಲದ ಅಡಿಯಲಾಧಾರ ಹಿಡಿವರೆ ರೂಹಿಲ್ಲದ ಮುನ್ನ, ಒಡೆಯನಿಲ್ಲ ಬಂಟನಿಲ್ಲ ನಡೆಯಿಲ್ಲ ನುಡಿಯಿಲ್ಲ ಬೆಡಗಿಲ್ಲ ಒಡಲಿಲ್ಲದ ಮುನ್ನ, ಪೃಥ್ವಿ, ಅಪ್ಪು, ತೇಜ, ವಾಯು, ಆಕಾಶ, ಚಂದ್ರ, ಸೂರ್ಯರು ತಲೆದೋರದ ಮುನ್ನ, ದೇವನಿಲ್ಲ ಭಕ್ತನಿಲ್ಲದ ಮುನ್ನ, ನೀನು ನಾನುಯಿಲ್ಲದ ಮುನ್ನ, ಆಕಾರ ನಿರಾಕಾರವೇನೂಯಿಲ್ಲದ ಮುನ್ನ, ತಾನು ತಾನೆಂಬ ತಲ್ಲಣವಿಲ್ಲದಂದು, ಆ ಬಟ್ಟಬಯಲ ಬ್ರಹ್ಮವೆ ಘಟ್ಟಿಯಾದ ಘನವೆಂತೆಂದಡೆ: ನಿಮ್ಮನುವ ನೀವರಿದ ಘನಮಹಿಮರು ತಿಳಿದು ನೋಡಿರಣ್ಣ. ಆ ಬಟ್ಟಬಯಲೆಂದಡಾರು ಬಸವ, ಆ ಬಸವನೆಂದಡಾರು ಬಟ್ಟಬಯಲು. ಆ ಬ್ರಹ್ಮನೆಂದಡಾರು ಬಸವ, ಬಸವನೆಂದಡಾರು ಬ್ರಹ್ಮ. ಅಂತಪ್ಪ ಬಸವನ ಆ ಮೂಲವ ಬಲ್ಲವರು ನೀವು ಕೇಳಿರಣ್ಣ. ಬಸವ ಎಂಬ ಮೂರಕ್ಷರವೆ ಮೂಲಪ್ರಣವ. ಅದೆಂತೆಂದಡೆ:ಬಯೆಂಬುದೆ ಚಿನ್ನಾದ ಆಕಾರವಾಯಿತ್ತು, ಸಯೆಂಬುದೆ ಚಿದ್ಬಿಂದುವಾಯಿತ್ತು, ಮತ್ತಂ ಬಯೆಂಬುದೆ ಅಕಾರವಾಯಿತ್ತು, ಸ ಎಂಬುದೆ ಉಕಾರವಾಯಿತ್ತು. ವಾ ಯೆಂಬುದೆ ಚಿತ್ಕಳೆಯಾಯಿತ್ತು. ಮತ್ತಂ ಬಯೆಂಬುದೆ ಆಕಾರವಾಯಿತ್ತು, ಸ ಎಂಬುದೆ ಉಕಾರವಾಯಿತ್ತು. ವಾಯೆಂಬುದೆ ಮಕರವಾಯಿತ್ತು. ಮತ್ತೆ ಬಯೆಂಬುದೆ ನಾದವಾಯಿತ್ತು, ಸಯೆಂಬುದೆ ಬಿಂದುವಾಯಿತ್ತು, ವಾಯೆಂಬುದೆ ಕಳೆಯಾಯಿತ್ತು. ಮತ್ತೆ ಬ ಎಂಬುದೆ ಗುರುವಾಯಿತ್ತು, ಸಯೆಂಬುದೆ ಅಂಗವಾಯಿತ್ತು, ವಾ ಎಂಬುದೆ ಜಂಗಮವಾಯಿತ್ತು. ಬ ಎಂಬ ನಾದವೆತ್ತಲು, ಸ ಎಂಬ ಬಿಂದು ಕೂಡಲು, ವಾಯೆಂಬ ಕಳೆ ಬೆರೆಯಲು, ಗೋಳಕಾಕಾರವಾಗಿ ಆದಿಪ್ರಣಮವೆನಿಸಿತ್ತು. ಆದಿಪ್ರಣಮ, ಅನಾದಿಪ್ರಣಮ, ಅಂತ್ಯಪ್ರಣಮವೆಂಬವು ನಮ್ಮ ಬಸವಣ್ಣನ ಸ್ಥೂಲ ಸೂಕ್ಷ್ಮ ಕಾರಣ ಕಾಣಿರೆ. ಇಂತಪ್ಪ ಬಸವಣ್ಣ ಬಯಲಬ್ರಹ್ಮವನೆ ಮೆಯಿದು, ಮೆಲುಕಿರಿದು ಗೋಮಯವಿಕ್ಕಲು ಪೃಥ್ವಿಯಾಯಿತ್ತು. ಇಂತಪ್ಪ ಬಸವಣ್ಣ ಜಲವ ಬಿಡಲು ಅಪ್ಪುಮಯವಾಯಿತ್ತು. ಇಂತಪ್ಪ ಬಸವಣ್ಣನ ತೇಜವೆ ಅಗ್ನಿಯಾಯಿತ್ತು. ಇಂತಪ್ಪ ಬಸವಣ್ಣನ ಉಚ್ಛ್ವಾಸ ನಿಶ್ವಾಸವೆ ವಾಯುವಾಯಿತ್ತು. ಇಂತಪ್ಪ ಬಸವಣ್ಣನ ಶಬ್ದವೆ ಆಕಾಶವಾಯಿತ್ತು. ಇಂತಪ್ಪ ಬಸವಣ್ಣನ ಕಂಗಳ ಬೆಳಗೆ ಚಂದ್ರ ಸೂರ್ಯರಾದರು. ಇಂತಪ್ಪ ಬಸವಣ್ಣನ ಬುದ್ಧಿಯೆ ಆತ್ಮವೆನಿಸಿ, ಅಷ್ಟತನುಮೂರ್ತಿಯೆ ತನುವೆನಿಸಿ, ಪಿಂಡ ಬ್ರಹ್ಮಾಂಡ ಕೋಟ್ಯಾನುಕೋಟಿ ಅಂಡಪಿಂಡಾಂಡಂಗಳಿಗೆ ಒಡಲಾಗಿ, ಅಡಿಮುಡಿಗೆ ತಾನೆ ಆದಿಯಾಗಿ, ಸರ್ವವೂ ನಮ್ಮ ಬಸವಣ್ಣನ ಒಡಲಲ್ಲಿ ಹುಟ್ಟುತ್ತ ಬೆಳೆಯುತ್ತ ಅಳಿವುತಿಪ್ಪವು ಕಾಣಿರೆ. ಇಂತಪ್ಪ ಸಕಲಪ್ರಾಣಿಗಳಿಗೆ ನಮ್ಮ ಬಸವಣ್ಣನ ಗೋಮಯದಲ್ಲಿ ಹುಟ್ಟಿದ ಪೃಥ್ವಿಯೆ ಪದಾರ್ಥವೆ ಆದಿಜಲದಿಂದ ಹುಟ್ಟಿದ ಉದಕವೆ ಸಾರ. ತೇಜದಿಂದ ಹುಟ್ಟಿದ ಅಗ್ನಿಯೆ ಕಳೆ. ಉಚ್ಛ್ವಾಸ ನಿಶ್ವಾಸದಿಂದ ಹುಟ್ಟಿದ ಚಂದ್ರಸೂರ್ಯರೇ ಅರಿವು ಮರವೆ. ಬುದ್ಧಿಯಿಂದ ಹುಟ್ಟಿದ ಆತ್ಮನೆ ಚೈತನ್ಯಾತ್ಮ. ಇಂತೀ ಸರ್ವಪ್ರಾಣಿಗಳಿಗೆ ನಮ್ಮ ಬಸವಣ್ಣನೆ ಆದಿ ಕಾಣಿರೇ. ಆದಿಯಲ್ಲಿ ಹುಟ್ಟಿ, ಮಧ್ಯದಲ್ಲಿ ಬೆಳೆದು, ಅಂತ್ಯದಲ್ಲಿ ಲಯವನೆಯ್ದಿದರೆ, ಮತ್ತೆ ನಿಲ್ಲುವದಕ್ಕೆ ನಮ್ಮ ಬಸವಣ್ಣನೆ ಆದಿ ಕಾಣಿರೆ. ಇಂತೀ ಒಳ ಹೊರಗೆ ಕೈಕೊಂಬರೆ, ದೇವರು ಬೇರೊಬ್ಬರುಂಟಾದರೆ ಬಲ್ಲರೆ ನೀವು ಹೇಳಿ ತೋರಿರೆ. ಅಲ್ಲದಿರ್ದರೆ ನಿಮ್ಮ ವೇದಾಗಮಶಾಸ್ತ್ರಪುರಾಣಗಳ ಕೈಯಲ್ಲಿ ಹೇಳಿಸಿರೆ. ಇಂತೀ ಅನಾದಿಸಂಸಿದ್ಧ ಬಟ್ಟಬಯಲಬ್ರಹ್ಮವೆ ಬಸವನೆಂಬುದಂ ಕಾಣುತಿರ್ದು ಕೇಳುತಿರ್ದು ಹೇಳುತಿರ್ದು ಅರಿದಿರ್ದು, ಮತ್ತೆ ಕೀಳುದೈವಂಗಳನಾರಾಧಿಸಿ ಅರ್ಚನೆ ಪೂಜೆಯ ಹಲವು ಚಂದದಲ್ಲಿ ಮಾಡಿ, ಹಲವು ಜಾತಿ ಹಲವುದರುಶನವೆನಿಸಿಕೊಂಡುಸ ಹೊಲಬುದಪ್ಪಿದಿರಿ, ಹುಲುಮನುಜರಿರಾ. ಇನ್ನಾದರೂ ಅರಿದು ನೆನದು ಬದುಕಿ, ನಮ್ಮ ಬಸವಪ್ರಿಯ ಕೂಡಲ[ಚೆನ್ನ]ಸಂಗಮದೇವನ ಶ್ರೀಪಾದಪದ್ಮವ.
--------------
ಸಂಗಮೇಶ್ವರದ ಅಪ್ಪಣ್ಣ
ಶರೀರದಲ್ಲಿ ಷಡಾಧಾರಚಕ್ರವುಂಟೆಂಬ ಜಡೆಗಡಗಿದಲೆಯ, ಬಿಡುಗುರುಳ ಅಣ್ಣಗಳು ನೀವು ಕೇಳಿರೊ. ಬ್ರಹ್ಮಚಕ್ರದಲ್ಲಿ ಹುಟ್ಟಿ, ವಿಷ್ಣುಚಕ್ರದಲ್ಲಿ ಬೆಳೆದು, ರುದ್ರಚಕ್ರದಲ್ಲಿ ಸಾವುದನರಿಯದೆ, ಬಣ್ಣಬಚ್ಚನೆಯ ಮಾತ ಕಲಿತು, ಹೊನ್ನು ಹೆಣ್ಣು ಮಣ್ಣಿಗಾಗಿ ಅನ್ನವನಿಕ್ಕುವರ ಪ್ರಸನ್ನವ ಹಡೆಯಬಂದ ಗನ್ನಗಾರರಿಗೇಕೆ ಅರಿವಿನ ಸುದ್ದಿ ? ಆನಂದಕ್ಕತಿದೂರ, ಸ್ವಾನುಭಾವಾತ್ಮಕನೆ ಜಾಣನಾದೆಯಲ್ಲಾ, ನಿಃಕಳಂಕ ಮಲ್ಲಿಕಾರ್ಜುನಾ.
--------------
ಮೋಳಿಗೆ ಮಾರಯ್ಯ
ಆಧಾರದಲ್ಲಿ ಬ್ರಹ್ಮ ಸ್ವಾಯತವಾದ, ಸ್ವಾದಿಷಾ*ನದಲ್ಲಿ ವಿಷ್ಣು ಸ್ವಾಯತವಾದ. ಮಣಿಪೂರಕದಲ್ಲಿ ರುದ್ರ ಸ್ವಾಯತವಾದ, ಅನಾಹತದಲ್ಲಿ ಈಶ್ವರ ಸ್ವಾಯತವಾದ. ವಿಶುದ್ಧಿಯಲ್ಲಿ ಸದಾಶಿವ ಸ್ವಾಯತವಾದ, ಆಜ್ಞೆಯಲ್ಲಿ ಉಪಮಾತೀತ ಸ್ವಾಯತವಾದ._ ಇವರೆಲ್ಲರು; ಬಯಲಲ್ಲಿ ಹುಟ್ಟಿ ಬಯಲಲ್ಲಿ ಬೆಳೆದು, ಬಯಲಲಿಂಗವನೆ ಧರಿಸಿಕೊಂಡು, ಬಯಲನೆ ಆರಾಧಿಸಿ ಬಯಲಾಗಿ ಹೋಯಿತ್ತ ಕಂಡೆ ಗುಹೇಶ್ವರಾ
--------------
ಅಲ್ಲಮಪ್ರಭುದೇವರು
ಜಗದೊಳಗೆ ಹುಟ್ಟಿದವರೆಲ್ಲ ಹಗರಣಿಗರಾಗಿ ಹುಟ್ಟಿದರಲ್ಲದೆ, ಜಗವ ಗೆಲ್ಲಲರಿಯದೆ, ನಗೆಗೆಡೆಯಾಗಿ ಹೋದರು. ಎಮ್ಮ ಶರಣರು ಅಂತಲ್ಲ ಕೇಳಿರಣ್ಣಾ. ಜಗದಲ್ಲಿಯೇ ಹುಟ್ಟಿ, ಜಗದಲ್ಲಿಯೇ ಬೆಳೆದು, ಜಗದಂತೆ ಇದು, ಈ ಜಗವ ಗೆದ್ದು ಹೋಗುವರು. ನಿಗಮಶಾಸ್ತ್ರ ಸಾಕ್ಷಿಯಾಗಿ, ಚೆನ್ನಮಲ್ಲೇಶ್ವರ ನಿನಗಾಯಿತ್ತಯ್ಯಾ. ಅಂತಪ್ಪ ಚೆನ್ನಮಲ್ಲೇಶ್ವರನ ಪಾದವಡಿದು, ಅವರು ಹೋದ ಹಾದಿಗೊಂಡು ಹೋಗುವನಲ್ಲದೆ, ಈ ಮೇದಿನಿಯೊಳಗೆ ಕಾಮಕಾಲಾದಿಗಳ ಬಲೆಯೊಳಗೆ ಸಿಕ್ಕಿಬಿದ್ದು ಹೋದೆನಾದರೆ, ನಿಮ್ಮ ಪಾದಕ್ಕೆ ಅಂದೇ ದೂರವಯ್ಯಾ. ಬಸವಪ್ರಿಯ ಕೂಡಲಚೆನ್ನಬಸವಣ್ಣಾ.
--------------
ಹಡಪದ ಅಪ್ಪಣ್ಣ
ಶುಕ್ಲಶೋಣಿತದಲ್ಲಿ ಬಲಿದ ಕರುಳು ಕತ್ತಲೆಯಲ್ಲಿ ಬೆಳೆದು, ಮೂತ್ರನಾಳದಲ್ಲಿಳಿದು, ಕರ್ಮವೆ ಕರ್ತುವಾಗಿ, ಕಪಟವೆ ಆಶ್ರಯವಾಗಿ, ಕೇವಲಜ್ಞಾನಶೂನ್ಯವಾಗಿ, ಬರಿಯ ಮಾತ ಬಣ್ಣಿಸಿ, ಬಯಲ ಮಾತ ಕೊಟ್ಟು, ಬಸುರ ಮಾತ ತೆಗೆದು ಜಿಹ್ವೆ ಗುಹ್ಯಂಗಳ ಹೊರೆವ ಚೋರವಿದ್ಯಕ್ಕೆ ನಿಜ ಸಾಧ್ಯವಪ್ಪುದೆ ?ಅದು ಹುಸಿ. ಅದೆಂತೆಂದಡೆ: ಕರ್ಮಕಾಪಟ್ಯಮಾಶ್ರಿತ್ಯ ನಿರ್ಮಲಜ್ಞಾನವರ್ಜಿತಾಃ ವಾಗ್ಬ್ರಹ್ಮಣಿ ಪ್ರವರ್ತಂತೇ ಶಿಶ್ನೋದರಪರಾಯಣಾಃ ಇಂತೆಂದುದಾಗಿ, ತ್ರಿಡಂಬಿಂದೊಡಲ ಹೊರೆದು ಕುಟಿಲ ತಮಗಿಲ್ಲೆಂಬ ಡಂಭಕರನೇನೆಂಬೆನಯ್ಯಾ ಸೌರಾಷ್ಟ್ರ ಸೋಮೇಶ್ವರಾ.
--------------
ಆದಯ್ಯ
ಇನ್ನಷ್ಟು ... -->