ಅಥವಾ

ಒಟ್ಟು 83 ಕಡೆಗಳಲ್ಲಿ , 30 ವಚನಕಾರರು , 76 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಸಂಗಸಂಯೋಗವೆಂಬ ಪಟ್ಟಣದಲ್ಲಿ ಒಂದು ಲಿಂಗದ ಗುಡಿಯ ಕಂಡೆನಯ್ಯ. ಆ ಗುಡಿಯೊಳಗೆ ಒಬ್ಬ ಪೂಜಿತ ರೂಪನ ಕಂಡೆನಯ್ಯ. ಆ ಪೂಜಿತನ ಪಂಚಮುಖದ ಸರ್ಪ ನುಂಗಿ, ಆ ಸರ್ಪನ ಕೋಳಿ ನುಂಗಿ, ನಿರ್ವಯಲಾದುದ ಕಂಡೆ ನೋಡಾ ಝೇಂಕಾರ ನಿಜಲಿಂಗಪ್ರಭುವೆ.
--------------
ಜಕ್ಕಣಯ್ಯ
ತನು ಹೇಳಿಗೆ, ಮನ ಸರ್ಪನಾಗಿ, ತನ್ನಯ ವಿಲಾಸಿತದಿಂದ ಹೆಡೆಯೆತ್ತಿ ಆಡುತ್ತಿರಲಾಗಿ, ನಾನಾರೂಪು ತೋ[ರುವ] ಆಕಾಶದ ಮಧ್ಯದಲ್ಲಿ, ಉಭಯನಷ್ಟವಾದ ಚಿದ್ಘನರೂಪಿನ ಹದ್ದು ಬಂದು, ಹೊಯ್ಯಿತ್ತು ಸರ್ಪನ. ಆ ಸರ್ಪ ಹದ್ದಿನ ಕೊರಳ ಸುತ್ತಿ, ಬಾಯ ಬಿಟ್ಟು ಕಚ್ಚದಂತೆ ಹೆಡೆಯೊಳು ಮುಚ್ಚಿ, ಹದ್ದೆದ್ದಾಡದಂತಿರಲು, ಆ ಬುದ್ಧಿಯ ನೆನೆದು ಒದ್ದು, ತನ್ನ ಸಖದ ಉಗುರಿನಲ್ಲಿ ಹೆಡೆ ಉಡುಗಿ, ಹಾವಿನ ತೆಕ್ಕೆ ಬಿಟ್ಟು ಹದ್ದೆದ್ದಿದಿತ್ತು ಮಹದಾಕಾಶಕ್ಕೆ, ಸಗರದ ಬೊಮ್ಮನೊಡೆಯ ತನುಮನ ಸಂಗಮೇಶ್ವರಲಿಂಗದಲ್ಲಿ.
--------------
ಸಗರದ ಬೊಮ್ಮಣ್ಣ
ಒಂದು ಮುಳ್ಳ ಮೊನೆಯ ಮೇಲೆ ಎಂಬತ್ನಾಲ್ಕು ಲಕ್ಷ ಪಟ್ಟಣವ ಕಟ್ಟಿ, ಈ ಎಂಬತ್ನಾಲ್ಕು ಲಕ್ಷ ಪಟ್ಟಣಕ್ಕೆ ತಲೆಯಿಲ್ಲದ ತಳವಾರ, ಆ ತಲೆಯಿಲ್ಲದ ತಳವಾರನ ತಂಗಿ ಮಾತಿನಲಿ ಕಡುಜಾಣೆ. ಆಕೆ ಸರ್ಪನ ಸಿಂಬೆಯ ಮಾಡಿಕೊಂಡು ತಳವಿಲ್ಲದ ಕೊಡನ ತಕ್ಕೊಂಡು ಜಲವಿಲ್ಲದ ಬಾವಿಗೆ ನೀರಿಗೆ ಹೋದಳು. ಆ ಜಲವಿಲ್ಲದ ಬಾವಿಯೊಳೊಂದು ಬೇರಿಲ್ಲದ ಸಸಿ ಪುಟ್ಟಿತ್ತು. ಆ ಬೇರಿಲ್ಲದ ಸಸಿ ವೃಕ್ಷವಾಗಿರಲಾವೃಕ್ಷವ ಕಾಲಿಲ್ಲದ ಮೃಗ ಏರಿ ಹೋಗುತ್ತಿತ್ತು. ಅದ ಕಣ್ಣಿಲ್ಲದ ಕುರುಡ ಕಂಡ. ಕೈಯಿಲ್ಲದ ಪುರುಷ ಹೆದೆಯಿಲ್ಲದ ಬಿಲ್ಲ ಪಿಡಿದು, ಅಲಗಿಲ್ಲದಂಬಿನಲ್ಲೆಸೆಯಲಾ ಮೃಗವ ತಾಕಲಿಲ್ಲ. ಅದರ ಹೊಟ್ಟೆಯೊಳಗಿರ್ದ ಪಿಂಡಕ್ಕೆ ತಾಕಿತ್ತು. ಇದ ಕಂಡು ಬೆರಗಾದ ನಮ್ಮ ಗುಹೇಶ್ವರ.
--------------
ಅಲ್ಲಮಪ್ರಭುದೇವರು
ಐದು ಕೇರಿಯ ಮುಂದೆ ಒಂದು ಗ್ರಾಮವ ಕಂಡೆನಯ್ಯ, ಆ ಗ್ರಾಮದ ಮುಂದೆ ಒಂದು ಗುಡಿಯ ಕಂಡೆನಯ್ಯ. ಆ ಗುಡಿಯೊಳಗೊಬ್ಬ ಪುರುಷನು ಲಿಂಗಾರ್ಚನೆಯ ಮಾಡುತಿರ್ಪನು ನೋಡಾ ! ಆ ಪುರುಷನ ಸರ್ಪ ನುಂಗಿ, ಆ ಸರ್ಪನ ಕಪ್ಪೆ ನುಂಗಿ ನಿರ್ವಯಲಾದುದ ಕಂಡೆನಯ್ಯ ಝೇಂಕಾರ ನಿಜಲಿಂಗಪ್ರಭುವೆ.
--------------
ಜಕ್ಕಣಯ್ಯ
ತನುವೆಂಬ ಹುತ್ತಕ್ಕೆ ಮನವೆಂಬ ಸರ್ಪ ಆವರಿಸಿ, ಹೆಡೆಯೆತ್ತಿ ಆಡುತ್ತಿರಲು, ಆ ಸರ್ಪನ ಕಂಡು, ನಾ ಹೆದರಿಕೊಂಡು, ಗುರುಕರುಣವೆಂಬ ಪರುಷವ ತಂದು ಮುಟ್ಟಿಸಲು, ನೋಟ ನಿಂದಿತ್ತು, ಹೆಡೆ ಅಡಗಿತ್ತು, ಹಾವು ಬಯಲಾಯಿತ್ತು. ಆ ಗುರುಕರುಣವೆಂಬ ಪರುಷವೆ ನಿಂದಿತ್ತು. ನಿಂದ ಪರುಷವನೆ ಕೊಂಡು ನಿಜದಲ್ಲಿ ನಿರ್ವಯಲಾಗುವ ಶರಣರ ಪಾದವ ನಂಬಿ ಕೆಟ್ಟು ಬಟ್ಟಬಯಲಾದೆನಯ್ಯಾ, ಅಪ್ಪಣ್ಣಪ್ರಿಯ ಚೆನ್ನಬಸವಣ್ಣಾ.
--------------
ಹಡಪದಪ್ಪಣ್ಣಗಳ ಪುಣ್ಯಸ್ತ್ರೀ ಲಿಂಗಮ್ಮ
ಕಾಯವೆಂಬ ಹುತ್ತಿನಲ್ಲಿ ಮಾಯವೆಂಬ ಸರ್ಪನು ಮನೆಯ ಮಾಡಿಕೊಂಡು ತ್ರಿಜಗವನೆಲ್ಲ ನುಂಗಿಕೊಂಡಿರ್ಪುದು ನೋಡಾ. ಕಡೆಯ ಬಾಗಿಲಲ್ಲಿ ಗಾರುಡಿಗ ನಿಂದು ನಾಗಸ್ವರದ ನಾದವ ಮಾಡಲು ಆ ನಾಗಸ್ವರದ ನಾದವ ಕೇಳಿ ತ್ರಿಲೋಕದಿಂದ ಎದ್ದ ಸರ್ಪನ ತಲೆಯ ಮೇಲೆ ರತ್ನವಿಪ್ಪುದು ನೋಡಾ. ಆ ರತ್ನವ ಕಣ್ಣು ಇಲ್ಲದವ ಕಂಡು, ಕೈಯಿಲ್ಲದವ ತಕ್ಕೊಂಡು ಮಣ್ಣು ಇಲ್ಲದ ಹಾಳಿನಲ್ಲಿ ಇಟ್ಟು, ಆ ರತ್ನವು ಮಹಾಲಿಂಗಕ್ಕೆ ಸಂದಿತ್ತು ನೋಡಾ ಝೇಂಕಾರ ನಿಜಲಿಂಗಪ್ರಭುವೆ.
--------------
ಜಕ್ಕಣಯ್ಯ
ಕವಿಗಳ ತರ್ಕದ ಪ್ರಸ್ತಾವನ ವಚನ: ಪಾದ ಪ್ರಾಸ ಗಣವ ಬಲ್ಲೆನೆಂಬ ಅಣ್ಣಗಳು ನೀವು ಕೇಳಿರೊ. ತನ್ನಂಗಪಥದಲ್ಲಿದ್ದ ಪೃಥ್ವಿಯ ಮೂಲವನಳಿದು ಆ ನಾಗಲೋಕದ ಸರ್ಪನ ಎಬ್ಬಿಸಿ, ಆಕಾಶಮೂಲಕ್ಕೆ ನಡೆಸಬಲ್ಲಡೆ ಆತ ಪಾದಕಾರುಣ್ಯದ ಬಲ್ಲನೆಂದೆನಿಸಬಹುದು. ಅಷ್ಟದಳಕಮಲದ ಹುಗುಲ ಹಿಡಿದು ಮೆಟ್ಟಿ ಒಂಬತ್ತು ಪರಿಯಲ್ಲಿ ಸುತ್ತಿ ಆಡುವ ಅಗ್ರವ ನಿಲ್ಲಿಸಿ, ನಾಲ್ಕು ಮುಖದ ಬಿರಡದಲ್ಲಿ ಸಿಂಹಾಸನವನಿಕ್ಕಿದ ಮಹಾರಾಯನ ನಿರೀಕ್ಷಣವ ಮಾಡಬಲ್ಲರೆ ಆತ ಪ್ರಾಸವ ಬಲ್ಲವನೆಂದೆನಿಸಬಹುದು. ಹತ್ತುಮುಖದಲ್ಲಿ ಹರಿದಾಡುವ ವಾಯುವ ಏಕವ ಮಾಡಬಲ್ಲರೆ, ಮೂರು ಪವನವೊಂದರೊಳು ಕೂಡಿ ಪಂಚದ್ವಾರದಲ್ಲಿ ತುಂಬಿ ಮೇಲ್ಗಿರಿಗೆ ನಡಸಿ ಪರಮಾಮೃತದ ಹೊಳೆಯ ನಿಲ್ಲಿಸಬಲ್ಲರೆ ಆತ ಗಣವ ಬಲ್ಲವನೆಂದೆನಿಸಬಹುದು. ಇದನರಿಯದೆ ಛಂದ ನಿಘಂಟು ಅಸಿ ವ್ಯಾಕರಣಂಗಳು ಪಂಚಮಹಾಕಾವ್ಯಂಗಳುಯೆಂಬ ಮಡಕಿಯ ಅಟ್ಟುಂಡ ಹಂಚಮಾಡಿ ಬಿಟ್ಟುಹೋಹುದನರಿಯದೆ ಆ ಹಂಚನೆ ಹಿಡಿದು ಕವಿಯೆಂದು ತಿರಿದುಂಬ ದೀಕ್ಷವಿಲ್ಲದ ತಿರುಕರಿಗೆ ಕವಿಗಳೆನುವವರ ಕಂಡು ನಗುತಿರ್ದ ನಮ್ಮ ಗೊಹೇಶ್ವರಪ್ರಿಯ ನಿರಾಳಲಿಂಗ.
--------------
ಗುಹೇಶ್ವರಯ್ಯ
ಹುಲ್ಲು ಕೆಂಡವ ಮುಟ್ಟಿ ಹೊತ್ತದ ಪರಿಯ ನೋಡಾ, ಹಸಿದ ಸರ್ಪನ ಹೆಡೆಯ ನೆಳಲಲ್ಲಿ ಮಂಡುಕ ನಿಂದ ತೆರನ ನೋಡಾ. ಜೀವ ಪರಮನಲ್ಲಿ ಬಂದುನಿಂದು ಒಂದಾಗದ ಸಂದೇಹವ ನೋಡಾ, ಇಂತೀ ಸಂದನರಿದಲ್ಲದೆ ಅಂಗ-ಲಿಂಗ ಪ್ರಾಣ-ಪರಮವೊಂದಾಗಲಿಲ್ಲ, ಸದಾಶಿವಮೂರ್ತಿಲಿಂಗವನರಿವುದಕ್ಕೆ.
--------------
ಅರಿವಿನ ಮಾರಿತಂದೆ
ಸರ್ಪನ ಹಿಡಿವಲ್ಲಿ ಅಧಮತ್ವವ ಮಾಡುವ ಮಂತ್ರವಿರಬೇಕು. ಶಸ್ತ್ರವ ಹಿಡಿವಲ್ಲಿ ರಣಕ್ಕೆ ನಿಶ್ಚಯನಾಗಿರಬೇಕು. ಭಕ್ತಿಯ ಹಿಡಿವಲ್ಲಿ ತ್ರಿವಿಧಕ್ಕೆ ಮುಚ್ಚಳವನಿಕ್ಕದಿರಬೇಕು. ಇಂತೀ ಗುಣ, ನಿಶ್ಚಟರಿಗಲ್ಲದೆ, ಮಿಕ್ಕಿನ ಪುಕ್ಕಟನಾಥರಿಗೆಲ್ಲಿಯದೊ, ನಿಃಕಳಂಕ ಮಲ್ಲಿಕಾರ್ಜುನಾ ?
--------------
ಮೋಳಿಗೆ ಮಾರಯ್ಯ
ಬ್ರಹ್ಮವಿಷ್ಣುರುದ್ರಾದಿಗಳಿಲ್ಲದಂದು, ಈಶ್ವರಸದಾಶಿವ ಪರಶಿವರಿಲ್ಲದಂದು, ನಾದಬಿಂದುಕಲಾತೀತವಿಲ್ಲದಂದು, ಇಂತಿರ್ದ ಬ್ರಹ್ಮವು ತಾನೇ ನೋಡಾ! ಆ ಬ್ರಹ್ಮದ ಚಿದ್ವಿಲಾಸದಿಂದ ಒಬ್ಬ ಶಿವನಾದ. ಆ ಶಿವನಿಂಗೆ ವದನ ಒಂದು, ನಯನ ಮೂರು, ಹಸ್ತ ಆರು, ಮೂವತ್ತಾರು ಪಾದಂಗಳು. ಒಂಬತ್ತು ಬಾಗಿಲ ಮನೆಯೊಳಗೆ ಸುಳಿದಾಡುವ ಗಾರುಡಿಗನು. ಕಡೆಯ ಬಾಗಿಲ ಮುಂದೆ ನಿಂದು ನಾಗಸ್ವರದ ನಾದವ ಮಾಡಲು ಆ ನಾಗಸ್ವರವ ಕೇಳಿ ನಾಭಿಮಂಡಲದಿಂದ ಎದ್ದ ಸರ್ಪನು, ಸಪ್ತೇಳು ಸಾಗರಂಗಳ ದಾಂಟಿ, ಅಷ್ಟಕುಲಪರ್ವತಂಗಳ ದಾಂಟಿ, ಚತುರ್ದಶ ಭುವನಂಗಳ ಮೀರಿ ನಿಂದ. ಸರ್ಪನ ತಲೆಯ ಮೇಲೆ ಒಂದು ರತ್ನವಿಹುದು ನೋಡಾ! ಆ ರತ್ನದ ಬೆಳಗಿನೊಳಗೆ ಅನಂತಕೋಟಿ ಸೋಮಸೂರ್ಯರ ಬೆಳಗು ನೋಡಾ! ಒಂದು ಶಿವಾಲಯಕ್ಕೆ ಆರು ಕಂಬ, ಮೂರು ಮೇರುವೆ, ನಿಃಶೂನ್ಯವೆಂಬ ಕಳಸವನಿಕ್ಕಿ ಆ ಶಿವಾಲಯವ ನಿಜಬ್ರಹ್ಮಲಿಂಗವು ಕಾಯ್ದುಕೊಂಡಿರ್ಪುದು ನೋಡಾ! ಇದೇನು ವಿಚಿತ್ರವೆಂದು ನಿಶ್ಚಿಂತ ನಿರಾಳವಾಸಿಯಾದನಯ್ಯ ನಿಮ್ಮ ಶರಣನು ಝೇಂಕಾರ ನಿಜಲಿಂಗಪ್ರಭುವೆ.
--------------
ಜಕ್ಕಣಯ್ಯ
ನಾನಾ ಯೋನಿಯಲ್ಲಿ ತಿರುಗಿ ಬಂದನಾಗಿ ಗುರುವಲ್ಲ. ನಾನಾ ಶಿಲೆಯಲ್ಲಿ ರೂಹಿಟ್ಟು ಬಂದುದಾಗಿ ಲಿಂಗವಲ್ಲ. ನಾನಾ ಯಾಚಕ ವಿಕಾರದಿಂದ ತಿರುಗುವನಾಗಿ ಜಂಗಮವಲ್ಲ. ಜನನರಹಿತ ಗುರು, ಅವತಾರರಹಿತ ಲಿಂಗ, ಮರಣರಹಿತ ಜಂಗಮ. ಹೀಗಲ್ಲದೆ ತ್ರಿವಿಧವ ಕಳೆಯಬಾರದು. ತ್ರಿವಿಧಕ್ಕೆ ತ್ರಿವಿಧವನಿತ್ತು, ಗುರುವಿನ ಹಂಗ ಮರೆಯಬೇಕು. ತ್ರಿವಿಧಕ್ಕೆ ತ್ರಿವಿಧವನಿತ್ತು, ಲಿಂಗದ ಹಂಗ ಮರೆಯಬೇಕು. ತ್ರಿವಿಧಕ್ಕೆ ತ್ರಿವಿಧವನಿತ್ತು, ಜಂಗಮದ ಹಂಗ ಮರೆಯಬೇಕು. ಮೂರರೊಳಗಾದ ಆರು ಕೊಟ್ಟು, ಐದನಿರಿಸಿಕೊಂಡು, ಇಪ್ಪತ್ತೈದರ ಲೆಕ್ಕದಲ್ಲಿರಿಸಿ, ಐವತ್ತೊಂದು ಬಿಂದುವಿನಲ್ಲಿ ಹೊಂದಿಸಿ, ಓಂಕಾರವಪ್ಪ ಪ್ರಣಮವ ಪರಿಣಾಮಿಸಿ, ವ್ಯಾಪಾರದ ಲತೆಯ ಬಳ್ಳಿಯ ಬೇರ ಕಿತ್ತು, ಪರ್ವಿ ಪ್ರಕಾರದಿಂದ ಉರ್ವಿಯ ಸುತ್ತಿಮುತ್ತಿ ಬೆಳೆದ ಚಿತ್ತಬಿದಿರಿನ ನಡುವಿದ್ದ ಹುತ್ತದ ಬಹುಮುಖದ ಸರ್ಪನ ಹಿಡಿದು, ಕಾಳೋರಗನಂ ಬೇರು ಮಾಡಿ, ಲೀಲೆಗೆ ಹೊರಗಾಗಿ ಭಾಳಲೋಚನನಂ ಕೀಳುಮಾಡಿ, ಬಾಲೆಯರ ಬಣ್ಣಕ್ಕೆ ಸೋಲದೆ, ಕಾಳುಶರೀರವೆಂಬ ಒತ್ತರಂಗೊಳ್ಳದೆ, ಗತಿ ಮತಿ ಗುಣ ಸಂಸರ್ಗ ವಿಪಿನ ಕಂಟಕಕ್ಕೊಳಗಾಗದೆ, ಪಿಂಡಪ್ರಾಣದ ವಾಯುಸಂಚಾರಕ್ಕೀಡುಮಾಡದೆ, ಅರಿದೆನೆಂಬುದಕ್ಕೆ ಕುರುಹಿಲ್ಲದೆ, ಕುರುಹಿಗೆ ಅವಧಿಗೊಡಲಿಲ್ಲದೆ, ಹುಸಿ ಮಸಿಯ ಮಣಿಮಾಡದಲ್ಲಿ ಒರಗದೆ, ಪರಿಣಾಮವೇ ಪಥ್ಯವಾಗಿ, ಅಂತರಂಗಶುದ್ಧಿ ಪರಿಪೂರ್ಣವಾಗಿ ನಿಂದು, ಸಂಸಾರಕ್ಕೆ ಸಿಕ್ಕದೆ, ನಿಂದ ನಿಜ ತಾನಾಗಿ ಲಿಂಗೈಕ್ಯವು. ನಿಃಕಳಂಕ ಮಲ್ಲಿಕಾರ್ಜುನನಲ್ಲಿ ಸರ್ವಾಂಗದಲ್ಲಿ ನಿರ್ಲೇಪವಾ[ದುದೇ] ಶರಣಸ್ಥಲ.
--------------
ಮೋಳಿಗೆ ಮಾರಯ್ಯ
ಆನೆಯ ನುಂಗಿದ ಹುಲಿ, ಹುಲಿಯ ನುಂಗಿದ ಸರ್ಪ, ಸರ್ಪನ ನುಂಗಿದ ಸಿಂಹ, ಸಿಂಹನ ನುಂಗಿದ ಮರೆ, ಮರೆಯ ನುಂಗಿದ ಭಲ್ಲೂಕ ಇಂತಿವರು ಹಕ್ಕಿಯ ಹೊಲನಲ್ಲಿ ತಮ್ಮ ತಮ್ಮ ವೈರತ್ವದಿಂದಲಿರುವುದಿದೇನು ಚೋದ್ಯ ಹೇಳಾ ಪರಮಗುರು ಪಡುವಿಡಿ ಸಿದ್ಧಮಲ್ಲಿನಾಥಪ್ರಭುವೆ.
--------------
ಹೇಮಗಲ್ಲ ಹಂಪ
ಸರ್ಪನ ಹೆಡೆಯ ಮೇಲೆಪ್ಪತ್ತೇಳುಲೋಕವ ಕಂಡೆನಯ್ಯಾ. ಎಪ್ಪತ್ತೇಳುಲೋಕದೊಳಗಿಪ್ಪ ಎಪ್ಪತ್ತೇಳು ಕರ್ಪುರದ ಗಿರಿಗಳ ಕಂಡೆನಯ್ಯಾ. ಎಪ್ಪತ್ತೇಳು ಕರ್ಪುರದ ಗಿರಿಗಳ ಮೇಲಿಪ್ಪ ಎಪ್ಪತ್ತೇಳು ಉರಿಯ ಕಂಬವ ಕಂಡೆನಯ್ಯಾ. ಆ ಎಪ್ಪತ್ತೇಳು ಉರಿಯ ಕಂಬದ ಮೇಲಿಪ್ಪ ಎಪ್ಪತ್ತೇಳು ಅರಗಿನ ಪುತ್ಥಳಿಯ ಕಂಡೆನಯ್ಯಾ. ಆ ಎಪ್ಪತ್ತೇಳು ಅರಗಿನ ಪುತ್ಥಳಿಯು ಕರಗಿಹೋದವು. ಆ ಎಪ್ಪತ್ತೇಳು ಕರ್ಪುರದ ಗಿರಿಗಳೆಲ್ಲಾ ಉರಿದುಹೋದವು. ಆ ಎಪ್ಪತ್ತೇಳುಲೋಕವೆಲ್ಲವು ಹಾಳಾಗಿಹೋದವು. ಆ ಸರ್ಪ ಬೆಂದು ಸತ್ತುಹೋಯಿತ್ತು. ಇನ್ನು ನಿಃಪತಿ ನಿರಾಳವೆಂಬ ನಿಜ ಒಳಕೊಂಡ ಬಳಿಕ, ನಾನೆತ್ತ ಹೋದೆನೆಂದರಿಯೆನಯ್ಯಾ. ಶುದ್ಧಸಿದ್ಧ ಪ್ರಸಿದ್ಧ ಪ್ರಸನ್ನ ಪ್ರಭುವೆ ಶಾಂತಚೆನ್ನಮಲ್ಲಿಕಾರ್ಜುನದೇವಯ್ಯಾ, ನಿಮ್ಮ ಸರ್ಪನ ಪರಿಯ ನೀವೇ ಬಲ್ಲಿರಲ್ಲದೆ ನಾನೆತ್ತ ಬಲ್ಲೆನಯ್ಯಾ, ನಿಮ್ಮ ಧರ್ಮ ನಿಮ್ಮ ಧರ್ಮ ನಿಮ್ಮ ಧರ್ಮ.
--------------
ಮರುಳಶಂಕರದೇವ
ಕವಿ ಕವಿಗಳೆಂದು ಹೆಸರಿಟ್ಟುಕೊಂಡು ನುಡಿವ ಅಣ್ಣಗಳಿರಾ ! ಕಾಯದ ಕೀಲನರಿತು ಕವಿತ್ವವನು ಮಾಡುವಂಥ ಭೇದವನು ಬಲ್ಲರೆ ಹೇಳಿ, ಅರಿಯದಿರ್ದರೆ ಕೇಳಿ. ನಿಮ್ಮ ಅಂಗಕಾಯವೆಂಬ ಅಕ್ಷರಕ್ಕೆ `ವಾ' ಎಂಬ ಒತ್ತು ಕೊಟ್ಟು ಇಳಿಯ ತೆಗೆದು ಜನ್ಮದಲ್ಲಿ ನುಡಿಸಬಲ್ಲರೆ ಆತನೀಗ ಪಂಚತತ್ವದ ಮೂಲವ ತಿಳಿದು ಮನವೆಂಬ ಗದ್ದಿಗೆಯ ಅಜ್ಞಾನವೆಂಬ ನಾದಸ್ವರವನು ಹಿಡಿದುಕೊಂಡು ಅದರ ಅನುವರಿತು ಊದಿ, ಪಿಂದೆ ದಾಡೆಯಿಂದ ಪೃಥ್ವಿಯ ಎತ್ತಿದ ಸರ್ಪನ ಎಬ್ಬಿಸಿ ಬ್ರಹ್ಮಾಂಡಕ್ಕೆ ಮುಖ ಮಾಡಿ ನಿಲ್ಲಿಸಬಲ್ಲರೆ ಆತನಿಗಾಗಿ ಗೀತ ಗಾಯನ ವಾದ್ಯ ಪ್ರಾಸ ದೀರ್ಘ ಗುರು ಲಘುಗಳೆಂಬ ಭೇದವ ಬಲ್ಲೆನೆಂದೆನ್ನಬಹುದು. ನಿಮ್ಮ ಅಂಗ ಕಾಯವೆಂಬ ಅಕ್ಷರಕ್ಕೆ `ವಾ' ಎಂಬ ಒತ್ತುಕೊಟ್ಟು ಕಾಣಿರೋ ! ಗುಡಿಸ ಕೊಟ್ಟು, ಗುಡಿಸಿನ ಒಳಗೆ ಸುಳಿದು ಜಿಹ್ವೆಯಲ್ಲಿ ನುಡಿಸಬಲ್ಲರೆ ಅಂತಹವನಿಗೆ ತನ್ನ ತನುವೆಂಬ ಹುತ್ತದ ಒಂಬತ್ತು ಹೆಜ್ಜವನು ಮುಚ್ಚಿದ ದ್ವಾರಂಗಳನ್ನೆಲ್ಲ ಬಳಿದು ಅಂಬರಮಂಟಪದೊಳಗೆ ಸುಳಿದಾಡುವಂಥ ಶಂಭುಲಿಂಗವನು ನೋಡಿಕೊಂಡು ಸಂತೈಸಿ, ವರುಷ ವರುಷಕ್ಕೆ ಒಂದು ಸಂಭ್ರಮದ ಜಾತ್ರೆಯ ನೆರೆಯಬಲ್ಲರೆ ಆತನಿಗೆ ಮಹಾಪ್ರೌಢನೆಂದೆನ್ನಬಹುದು ಕಾಣಿರೋ. ನಿಮ್ಮ ಕಾಯವೆಂಬ ಅಕ್ಷರಕ್ಕೆ `ವಾ' ಎಂಬ ಒತ್ತುಕೊಟ್ಟು, ಕೊಂಬಿನಿಂದಿಳಿಯ ತೆಗೆದು ಆತನಿಗೆ ಆರು ಮೂರುಗಳೆಂಬ ನವರಸವಿದ್ಯ ನಾದವನೆಬ್ಬಿಸುವಂಥ ತಾಳಗತಿಯ ಪದಕಾರಣವ ಬಲ್ಲನೆಂದೆನ್ನಬಹುದು ಕಾಣಿರೋ. ನಿಮ್ಮ ಅಂಗಕಾಯವೆಂಬ ಅಕ್ಷರಕ್ಕೆ `ವಾ' ಎಂಬ ಒತ್ತುಕೊಟ್ಟು ಮೇಲೆತ್ವವಂ ಕೊಟ್ಟು, ಕೆಳಗೈತ್ವವಂ ಕೊಟ್ಟು, ಇವೆರಡನು ಕೂಡಿ ಒಂದಮಾಡಿ ನುಡಿಸಬಲ್ಲರೆ ಆತನಿಗೆ ಸ್ವರ್ಗ ಮತ್ರ್ಯ ಪಾತಾಳ ಇಂತೇಳು ಭುವನ, ಹದಿನಾಲ್ಕು ಲೋಕ, ಸಪ್ತೇಳುಸಾಗರ, ಅಷ್ಟಲಕ್ಷ ಗಿರಿಪರ್ವತಗಳನ್ನೆಲ್ಲ ತನ್ನ ಅಂತರಂಗವೆಂಬ ಕುಕ್ಷಿಯೊಳಗೆ ಇಂಬಿಟ್ಟುಕೊಂಡು ಪರರಿಗೆ ಕಾಣಬಾರದಂತಹ ಕುರೂಪಿಯಾಗಿ ಇರಬಲ್ಲರೆ ಆತನಿಗೆ ಮಹಾಶಿವಜ್ಞಾನಿಯೆಂದೆನ್ನಬಹುದು ಕಾಣಿರೋ. ನಿಮ್ಮ ಅಂಗಕಾಯವೆಂಬ ಅಕ್ಷರಕ್ಕೆ `ವಾ' ಎಂಬ ಒತ್ತುಕೊಟ್ಟು, ಉತ್ವ ಔತ್ವ ಕೊಟ್ಟು, ಉತ್ವ ಔತ್ವವೆರಡನು ಕೂಡಿ ಒಂದುಮಾಡಿ ನಿಲಿಸಿ ಜಮ್ಮೆದಲ್ಲಿ ನುಡಿಸಬಲ್ಲರೆ ಆತನಿಗೆ ಆ ನರಕವಿ ವರಕವಿಗಳ ಕಣ್ಣಿಗೆ ಕಾಣಬಾರದಂತಹ ಮುಸುಕಿನ ಮುಡಿಯಂ ಮಂದಿರ ಮನೆಯೊಳಗೆ ಮುಹೂರ್ತವ ಮಾಡಿಕೊಂಡಿಹುದು. ಓಂಕಾರವೆಂಬುವದೊಂದು ಅಕ್ಷರವ ನೋಡಿ ಅನಂತ ಪರಿಪರಿಯ ವಚನಗಳ ಮಾಡಬಲ್ಲರೆ ಆತನಿಗೆ ಮಹಾ ಉತ್ತಮ ಶಿವಕವೀಶ್ವರನೆಂದೆನ್ನಬಹುದು ಕಾಣಿರೋ. ನಿಮ್ಮ ಅಂಗಕಾಯವೆಂಬ ಅಕ್ಷರಕ್ಕೆ `ವಾ' ಎಂಬ ಒತ್ತುಕೊಟ್ಟು ಒಂದು ಸೊನ್ನೆಯ ಕೊಟ್ಟರೆ `ವಂ' ಎಂದು ಅಂತರಂಗದಲ್ಲಿ ತಿಳಿದು, ಜಿಹ್ವೆಯಲ್ಲಿ ನುಡಿಯಬಲ್ಲರೆ ಆತನಿಗೆ ಕಾಯಪುರವೆಂಬ ಪಟ್ಟಣದೊಳಗೆ ಹರಿದಾಡುವಂಥ ಆರುಮಂದಿ ತಳವಾರರ ತಲೆಯ ಕುಟ್ಟಿ, ಮೂರುಮಂದಿ ಗರ ಬೆರೆದ ನೆಂಟರ ಮೂಗ ಕೊಯ್ದು, ಸಾವಿರೆಸಳಿನ ಕಮಲದೊಳಗೆ ಪೊಕ್ಕು, ತನ್ನ ಸಾವು ಮರಣ ತಪ್ಪಿಸಿಕೊಳ್ಳಬಲ್ಲರೆ ಆತನಿಗೆ ಮಹಾಶಿವಯೋಗೀಶ್ವರನೆಂದೆನ್ನಬಹುದು ಕಾಣಿರೋ. ನಿಮ್ಮ ಅಂಗಕಾಯವೆಂಬ ಅಕ್ಷರಕ್ಕೆ `ವಾ' ಎಂಬ ಒತ್ತುಕೊಟ್ಟು ಎರಡು ಸೊನ್ನೆಯ ಕೊಟ್ಟರೆ `ವಃ' ಎಂದು ಅಂತರಂಗದಲ್ಲಿ ತಿಳಿದು ಜಿಹ್ವೆಯಲ್ಲಿ ನುಡಿಯಬಲ್ಲರೆ, ಆತನಿಗೆ ತನ್ನ ಅಂತರಂಗವೆಂಬ ಹರಿವಾಣದೊಳಗೆ ತುಂಬಿಟ್ಟಿದ್ದಂತಹ ಷಡುರಸ ಪಂಚಾಮೃತ ಪಂಚಕಜ್ಜಾಯಗಳೆಲ್ಲ ಸವಿದುಂಡು ಚಪ್ಪರಿಸಿ ಹಿಪ್ಪೆಯ ಮಾಡಿ ಬೀದಿಯೊಳಗೆ ಬಿಸುಟಬಲ್ಲರೆ ಆತನಿಗೆ ಕಾಯದ ಕೀಲನರಿತು ಕವಿತ್ವವನು ಮಾಡುವಂತಹ ಪ್ರೌಢನೆಂದೆನ್ನಬಹುದು ಕಾಣಿರೋ. ಇಂತೀ ಕಾಯದ ಕೀಲನರಿಯದ ಕವಿಗಳು ಛಂದಸ್ಸು, ನಿಘಂಟು, ಅಮರ, ವ್ಯಾಕರಣ, ನಾನಾರ್ಥಗಳೆಂಬ ಹೆಂಚ ಹೊಡೆದು ನೆತ್ತಿಯ ಮೇಲೆ ಹೊತ್ತುಕೊಂಡು ತಿರುಗುವ ಕವಿಗಳೆಂಬ ಚಾತುರ್ಯದ ಮಾತ ನಿಟ್ಟಿಸಲು ಆಡ ಸವಿವ ಜಾತಿಗಳ ಕಂಡು ನಗುತಿರ್ದಾತ ಸಿದ್ಧಮಲ್ಲನದಾತ ಮೇಗಣಗವಿಯ ಗುರು ಶಿವಸಿದ್ಧೇಶ್ವರಪ್ರಭುವೆ.
--------------
ಸಿದ್ಧಮಲ್ಲಪ್ಪ
ಪಂಚೇಂದ್ರಿಯವೆಂಬ ಹೆಡೆಯನುಳ್ಳ ಸಂಸಾರಸರ್ಪ ದಷ್ಟವಾಗಲು, ಪಂಚವಿಷಯವೆಂಬ ವಿಷ ಹತ್ತಿ, ಮೂರ್ಛಾಗತರಾದರೆಲ್ಲ ಸಮಸ್ತ ಲೋಕದವರೆಲ್ಲ. ಸರ್ವರ ಕಚ್ಚಿ ಕೂಡಿಯಾಡುವ ಸರ್ಪನ ಬಾಯ, ಕಟ್ಟಲರಿಯದೆ ಮರಣವಾದರಲ್ಲ, ನಿಜಗುರು ಸ್ವತಂತ್ರಸಿದ್ಧಲಿಂಗೇಶ್ವರನರಿಯದವರೆಲ್ಲ.
--------------
ಸ್ವತಂತ್ರ ಸಿದ್ಧಲಿಂಗ
ಇನ್ನಷ್ಟು ... -->