ಅಥವಾ

ಒಟ್ಟು 54 ಕಡೆಗಳಲ್ಲಿ , 24 ವಚನಕಾರರು , 48 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಆಡಿ ದಣಿವರಿಯವಯ್ಯಾ ಎನ್ನ ಕಾಲುಗಳು, ಮಾಡಿ ದಣಿವರಿಯವಯ್ಯಾ ಎನ್ನ ಕೈಗಳು, ನೋಡಿ ದಣಿವರಿಯವಯ್ಯಾ ಎನ್ನ ಕಂಗಳು, ಹಾಡಿ ದಣಿವರಿಯದಯ್ಯಾ ಎನ್ನ ಜಿಹ್ವೆಯು. ಕೇಳಿ ದಣಿವರಿಯವಯ್ಯಾ ಎನ್ನ ಶ್ರೋತೃ, ಬೇಡಿ ದಣಿವರಿಯವಯ್ಯಾ ಗುರುನಿರಂಜನ ಚನ್ನಬಸವಲಿಂಗ ನಿಮ್ಮ ಶರಣರೊಲವೆ ಎನ್ನಭಾವ.
--------------
ದೇಶಿಕೇಂದ್ರ ಸಂಗನಬಸವಯ್ಯ
ಲಿಂಗವಂತರು ತಾವಾದ ಬಳಿಕ, ಅಂಗನೆಯರ ನಡೆನುಡಿಗೊಮ್ಮೆ ಲಿಂಗದ ರಾಣಿಯರೆಂದು ಭಾವಿಸಬೇಕು. ಲಿಂಗವಂತರು ತಾವಾದ ಬಳಿಕ, ಅನುಭವ ವಚನಗಳ ಹಾಡಿ ಸುಖದುಃಖಗಳಿಗಭೇದ್ಯವಾಗಿರಬೇಕು. ಲಿಂಗವಂತರು ತಾವಾದ ಬಳಿಕ, ಜಂಗಮವ ಪೂಜಿಸಿ ಸದಾ ಲಿಂಗೈಕ್ಯಸುಖಿಗಳಾಗಿರಬೇಕು ನೋಡಾ, ಕಪಿಲಸಿದ್ಧಮಲ್ಲಿಕಾರ್ಜುನಾ.
--------------
ಸಿದ್ಧರಾಮೇಶ್ವರ
ಶಾಂತಿಯ ಮಾಡಹೋದಡೆ ಬೇತಾಳವಾಯಿತ್ತಯ್ಯಾ. ಸೀತಾಳದಾಪ್ಯಾಯನವಾಯಿತೆಂದಡೆ ಪರಹಿತಾರ್ಥವೆಂದು ತೋರಿದೆನೆನ್ನ ಪ್ರಾಣಲಿಂಗವನು ನೇಮವ ಮಾಡಲೆಂದು ಕೊಟ್ಟಡೆ ಕೊಂಡೋಡಿ ಹೋದನು ಅನಿಮಿಷನು. ಅಭವನ ಮಹಾಮನೆಯ ಹೊಕ್ಕಡೆ ಎನಗೆ ಹೇಯವನೊಡ್ಡಿ ಅರಸೆಂದು ಕಳುಹಿದನು. ಅಳಲಿ ಬಳಲಿ ತೊಳಲಿ ಆಡಿಹಾಡಿ ಹಂಬಲಿಸಿ, ಅನಂತ ಅವಸ್ಥೆಯಿಂದ ಲಕ್ಷದ ಮೇಲೆ ತೊಂಬತ್ತಾರುಸಾವಿರ ವಚನವ ಹಾಡಿ ಆಚಾರ ವಿಚಾರದಿಂದ ವಿಚಿತ್ರನಭೆಯವ ಕೊಟ್ಟು ಕಳುಹಿಸಿದನಯ್ಯಾ. ಗೊಹೇಶ್ವರನ ಶರಣ ತೋರಿದಡರಿದನು ಕೂಡಲಸಂಗಮದೇವರ.
--------------
ಬಸವಣ್ಣ
ಆದಿ ಅನಾದಿಯಿಲ್ಲದತ್ತಣ ದೂರಕ್ಕೆ ದೂರದಲ್ಲಿ ಭಾವಕ್ಕೆ ನಿರ್ಭಾವಕ್ಕೆ ಬಾರದಿರ್ದ ನಿಷ್ಕಳಂಕ ಪರಬ್ರಹ್ಮವೇ ಮುನ್ನ ನೀನು ಶಾಖೆದೋರುವಲ್ಲಿ ನಿನ್ನೊಳಂಕುರಿಸಿ ನಾನು ತಾಮಸ ಮುಸುಂಕಿ ಜನನ ಮರಣಕ್ಕೊಳಗಾಗಿ ಚೌರಾಶಿ ಎಂಬತ್ತುನಾಲ್ಕು ಲಕ್ಷ ಪ್ರಾಣಿಗಳ ಗರ್ಭದಿಂದ ಬಂದು ಬಂದು ಒಮ್ಮೆ ಮಾನವನಪ್ಪಂದಿಗೆ ನಾನುಂಡು ಮೊಲೆಹಾಲು ಸಪ್ತಸಮುದ್ರಕ್ಕೆ ಸರಿಯಿಲ್ಲವಯ್ಯ. ಇಂತಪ್ಪ ಮಾನವ ಜನ್ಮದಲ್ಲಿ ಬಂದ ಬಂದುದು ಗಣಿತಕ್ಕೆ ಬಾರದಯ್ಯ. ಈ ಜನ್ಮದಲ್ಲಿ ಪಿಂಡೋತ್ಪತ್ತಿಯಲ್ಲಿಯೇ ಶರಣಸತಿ ಲಿಂಗಪತಿಯೆಂಬ ಜ್ಞಾನ ತಲೆದೋರಿ ಶರಣವೆಣ್ಣಾಗಿ ಹುಟ್ಟಿದೆನಯ್ಯ. ಎನಗೆ ನಿನ್ನ ಬಯಕೆಯೆಂಬ ಸಿಂಗಾರದ ಸಿರಿಮುಡಿಯಾಯಿತು. ಎನಗೆ ನಿನ್ನ ನೋಡುವೆನೆಂಬ ಮುಗುಳ್ಮೊಲೆ ಮೂಡಿದವು. ಎನಗೆ ನಿನ್ನೊಳು ನುಡಿಯಬೇಕೆಂಬ ಉರವಣೆಯ ಸಂಪದದ ಜವ್ವನ ಕುಡಿವರಿಯಿತ್ತು. ಎನಗೆ ನಿನ್ನನೊಲಿಸಬೇಕೆಂಬ ಸಂಭ್ರಮದ ಕಾಂಚೀಧಾಮ ಕಟಿಸೂತ್ರ ನೇವುರ ನಿಡುಗೊಂಡೆಯವೆಂಬಾಭರಣ ಅನುಲೇಪನ ವಸ್ತ್ರಂಗಳೆನಗೆ ಅಲಂಕಾರವಾಯಿತ್ತು. ಭಕ್ತಿಯೆಂಬ ವಿರಹಾಗ್ನಿ ಎನ್ನ ಹೃದಯಕಮಲದಲ್ಲಿ ಬೆಳೆದು ಬೀದಿವರಿದು ನಿಂತಲ್ಲಿ ನಿಲಲೀಸದಯ್ಯ. ಕುಳಿತಲ್ಲಿ ಕುಳ್ಳಿರಲೀಸದಯ್ಯ. ಮನ ನಿಂದಲ್ಲಿ ಮನೋಹರವಪ್ಪುದಯ್ಯ. ಅಂಗ ಮನ ಪ್ರಾಣ ನೇತ್ರ ಚಿತ್ತಂಗಳೊಳು ಪಂಚಮುಖವೆಂಬ ಪಂಚಬಾಣಂಗಳು ನೆಟ್ಟವಯ್ಯ. ನಾನು ಧರೆಯೊಳುಳಿವುದರಿದು. ಪ್ರೇಮದಿಂ ಬಂದು ಕಣ್ದುಂಬಿ ನೋಡಿ ಮನವೊಲಿದು ಮಾತಾಡಿ ಕರುಣದಿಂ ಕೈವಿಡಿದು ಅಕ್ಕರಿಂದಾಲಂಗಿಸಿ ದಿಟ್ಟಿಸಿ ಬೊಟ್ಟಾಡಿ ಲಲ್ಲೆವಾತಿಂ ಗಲ್ಲವ ಪಿಡಿದು ಪುಷ್ಪ ಪರಿಮಳದಂತೆ ನಾನು ನೀನುಭಯವಿಲ್ಲದಂತೆ ಕೂಡೆನ್ನ ಪ್ರಾಣೇಶನೇ. ಕೂಡಿದಿರ್ದೊಡೆ ಗಲ್ಲವ ಪಿಡಿ. ಪಿಡಿಯದಿರ್ದೊಡೆ ಬೊಟ್ಟಾಡು. ಬೊಟ್ಟಾಡದಿರ್ದೊಡೆ ಆಲಂಗಿಸು. ಆಲಂಗಿಸದಿರ್ದೊಡೆ ಕೈವಿಡಿ. ಕೈವಿಡಿಯದಿರ್ದೊಡೆ ಮಾತಾಡು. ಮಾತಾಡದಿರ್ದೊಡೆ ನೋಡು. ನೋಡದಿರ್ದೊಡೆ ಬಾ. ಬಾರದಿರ್ದೊಡೆ ಪ್ರಮಥಗಣಂಗಳೊಡನೆನ್ನವಳೆಂದು ನುಡಿ. ನುಡಿಯದಿರ್ದೊಡೆ ನಿನ್ನ ಮನದಲ್ಲಿ ನನ್ನವಳೆಂದು ಭಾವಿಸು. ಭಾವಿಸದಿರ್ದೊಡೆ ಪುಣ್ಯ ಕಣ್ದೆರೆಯದು. ಕರ್ಮ ಕಾಂತಿಯಪ್ಪುದು. ಕಾಮ ಕೈದುಗೊಂಬ, ಕಾಲ ಕಲಿಯಪ್ಪ. ಭವಕ್ಕೆ ಬಲ್ಮೆ ದೊರೆವುದು. ಇಂತೀ ಐವರು ಎನಗೆ ಅವಾಂತರದೊಳಗಾದ ಹಗೆಗಳಯ್ಯ, ಇವರೆನ್ನ ತಿಂದುತೇಗಿ ಹಿಂಡಿ ಹಿಪ್ಪೆಯಮಾಡಿ ನುಂಗಿ ಉಗುಳ್ದು ಹಿಂದಣ ಬಟ್ಟೆಗೆ ನೂಂಕುತಿಪ್ಪರಯ್ಯ. ಹೊಗಲಂಜುವೆನಯ್ಯ. ಹೋದರೆ ಚಂದ್ರಸೂರ್ಯಾದಿಗಳುಳ್ಳನಕ್ಕ ನಿನ್ನ ನೆನವ ಮನಕ್ಕೆ ನಿನ್ನ ಕೊಂಡಾಡುವ ಬಾಯ್ಗೆ ನಿನ್ನ ನೋಡುವ ಕಂಗಳಿಗೆ ಸೆರೆ ಸಂಕಲೆಯಪ್ಪುದಯ್ಯ. ಇಂತಿವಂ ತಿಳಿದು ನಿನ್ನ ಮನದೊಳು ನನ್ನವಳೆಂದರೆ ದಿವಾರಾತ್ರೆಯುಳ್ಳನ್ನಬರ ಎನ್ನ ಮನ ಜಿಹ್ವೆ ನೇತ್ರಂಗಳಿಗೆ ಬಂಧನಗಳೆಂಬಿವು ಮುಂಗೆಡುವುವಯ್ಯ. ನಿನ್ನನು ನೆನೆನೆನೆದು ನನ್ನ ಮನ ಬೀಗಿ ಬೆಳೆದು ತಳಿರಾಗಿ ಹೂ ಮಿಡಿಗೊಂಬುದಯ್ಯ. ನಿನ್ನ ಹಾಡಿ ಹಾಡಿ ನನ್ನ ಜಿಹ್ವೆ ಅಮೃತಸಾಗರದೊಳೋಲಾಡುತ್ತಿಪ್ಪುದಯ್ಯ. ನಿನ್ನಂ ನೋಡಿ ನೋಡಿ ಕಂಗಳು ನಿಜಮೋಕ್ಷಮಂ ಪಡೆವುವಯ್ಯ. ನಾನು ಈರೇಳು ಲೋಕಕ್ಕೆ ಬರುವ ಹಾದಿ ಹಾಳಾಗಿಪ್ಪುದಯ್ಯ. ಶತ್ರುಗಳೆನಗೆ ಮಿತ್ರರಪ್ಪರಯ್ಯ. ಭವದ ಬಳ್ಳಿ ಅಳಿವುದು. ಕಾಲಿನ ಕಲಿತನ ಕೆಡುವುದು. ಕಾಮನ ಕೈದು ಖಂಡಿಸುವುದು. ಕರ್ಮದ ಕಾಂತಿ ಕರಗುವುದು. ಪುಣ್ಯದ ಕಣ್ಣು ಬಣ್ಣಗೆಡುವುದಯ್ಯ. ನಿನಗೊಲಿದವರ ನಿನ್ನಂತೆ ಮಾಡು ಕೃಪಾಕರನೆ. ನಿನಗೆ ಮೆಚ್ಚಿದೆನಯ್ಯ. ನಿನ್ನ ಮೆಚ್ಚಿಸಿಕೊಳ್ಳಲರಿಯದ ಮುಗ್ಧವೆಣ್ಣಿನ ಪತಿಭಕ್ತಿಯಂ ಸಾಧಿಸು. ಎನ್ನವಸ್ಥೆಯಂ ಲಾಲಿಸು, ನಿನ್ನ ಶ್ರೀಪಾದಪದ್ಮದೊಳಗೆನ್ನನೊಡಗೂಡಿಸು. ಎನ್ನ ಬಿನ್ನಪಮಂ ಲಾಲಿಸು, ಘನಲಿಂಗಿಯ ಮೋಹದ ಚೆನ್ನಮಲ್ಲಿಕಾರ್ಜುನಾ.
--------------
ಘನಲಿಂಗಿದೇವ
ಭಕ್ತರಿಗೆ ಅಕ್ಕೆ ಶೋಕ ದುಃಖವುಂಟೆ ಅಯ್ಯಾ ? ಅತ್ತು ಕಳೆವ ನೋವ ಹಾಡಿ ಕಳೆಯಲೇಕಯ್ಯಾ ? ಈ ಮುಕ್ತಾಯಕ್ಕಗಳ ಕಕ್ಕುಲತೆಯ ಶಂಭುಜಕ್ಕೇಶ್ವರನ ಶರಣರೊಪ್ಪರಯ್ಯಾ.
--------------
ಸತ್ಯಕ್ಕ
ಶುದ್ಧಸಾಳಾಂಗಗತಿ ಗಮಕವಡೆದ ರಾಗದಲ್ಲಿ ಪರಿಠಾಯಕದಳ ಕಮ್ಮಟನು ಪೂಜಿತನು ರಸವನಾಲಿಸುತ ಗಜಗಮನೆಯರು ಆಡಿ ಹಾಡಿ ರುದ್ರವೀಣೆಯ ಬಾರಿಸುವಲ್ಲಿ ಬಧಿರ ಮೂಕ ಅಂಧಕರ ಮುಂದೆ ನೃತ್ಯ ತೋರಬಹುದೆ ? ಹಜ್ಜೆಯ ಹರಿಣ ಭುಜಂಗ ಜಂಬುಕ ಹುಲ್ಲೆಯ ತೋಳ ಹುಲಿ ಕರಡಿ ಒಬ್ಬುಳಿಯಾಗಿ ನೆರೆದಡೆ ದೇವಸಭೆಯಾಗಬಲ್ಲುದೆ ? ಶುದ್ಧಧವಳಿತ ಭಾನುಕೋಟಿತೇಜಪ್ರಭೆಮಂಡಲವ ರವಿ ಉದಯ ಒಬ್ಬನೆನಬಹುದೆ ದೇವ ಬಳ್ಳೇಶ್ವರ ವೀರಭದ್ರವತಾರವಾ ?
--------------
ಬಳ್ಳೇಶ ಮಲ್ಲಯ್ಯ
ಹಾಡಿ ಹೊಗಳುವ ಜಂಗಮವೆಲ್ಲ ಬ್ರಹ್ಮನ ಸಂತತಿ. ಕಾಡಿ ಬೇಡುವ ಜಂಗಮವೆಲ್ಲ ವಿಷ್ಣುವಿನ ಸಂತತಿ. ಹಾಗವರಿಯದೆ ಹೊಕ್ಕು ಉಂಬುವ ಜಂಗಮವೆಲ್ಲ [ರುದ್ರನ ಸಂತತಿ]. ವ್ಯಾಪಾರವ ಮಾಡುವ ಜಂಗಮವೆಲ್ಲ ಈಶ್ವರನ ಸಂತತಿ. ಇಂತೀ ಅನುಭಾವ ಮಾಡುವ ಜಂಗಮವೆಲ್ಲ ಪರಶಿವನ ಸಂತತಿ. ಮುಕ್ತಿ ಕುಸ್ತಿಯ ಮಾಡುವ ಜಂಗಮವೆಲ್ಲ ಮಹಾಲಿಂಗವೆನಿಸುವದು. ಹಾಡದೆ ಹೊಗಳದೆ ಕಾಡದೆ ಬೇಡದೆ, ಹಾಗವನರಿಯದೆ ಹೊಗದೆ ವ್ಯಾಪಾರ ಮಾಡದೆ, ಭಕ್ತಿಗೆ ತೊಲಗಿ ವ್ಯರ್ಥದಿ ಮುಕ್ತಿ ಕುಸ್ತಿಯನಾಡದೆ, ಭಿಕ್ಷವೆಂಬ ಶಬ್ದದಲ್ಲಿ ಇದಿರಿಟ್ಟು, ಪದಾರ್ಥವ ಲಿಂಗಕರ್ಪಿತವ ಮಾಡುವುದೆ ನಿಜಮುಕ್ತಿ. ಮಹದಾಕಾಶ ಮಹಿಮಾಪತಿಯೆಂಬ ಘನಲಿಂಗಕ್ಕೆ ಅರ್ಪಿತ ಮಾಡುವ ಗುರು. ಅದಾವುದೆಂದಡೆ : ಅದು ಅನಾದಿ ಸಂಜ್ಞೆಯೆಂಬ ಜಂಗಮವು. ಅಂಥ ಜಂಗಮದ ಶ್ರೀಚರಣ ನೆರೆನಂಬಿ, ನೆಟ್ಟನಳಿವಸ್ಥಿರಕಾಯರ ಎನಗೊಮ್ಮೆ ತೋರಿಸಯ್ಯಾ, ಜಂಗಮಲಿಂಗಪ್ರಭುವೆ.
--------------
ಜಂಗಮಲಿಂಗ ಪ್ರಭುವೆ
ಭಕ್ತನ ಹಾಡಿ ಬೇಡುವಾತ ಜಂಗಮವಲ್ಲ. ಭಕ್ತನ ಹೊಗಳಿ ಬೇಡುವಾತ ಜಂಗಮವಲ್ಲ. ಭಕ್ತನ ಓದಿ ಬೇಡುವಾತ ಜಂಗಮವಲ್ಲ. ಭಕ್ತನ ಕೊಂಡಾಡಿ ಬೇಡುವಾತ ಜಂಗಮವಲ್ಲ. ಭಕ್ತನ ಸ್ತುತಿಸಿ ಬೇಡುವಾತ ಜಂಗಮವಲ್ಲ. ಭಕ್ತನ ಕೈವಾರಿಸಿ ಬೇಡುವಾತ ಜಂಗಮವಲ್ಲ. ಕೂಡಲಚೆನ್ನಸಂಗಮದೇವರಲ್ಲಿ ಬೇಡದೆ ಮಾಡುವನೆ ಭಕ್ತ, ಬೇಡದೆ ಮಾಡಿಸಿಕೊಂಬಾತನೆ ಜಂಗಮ.
--------------
ಚನ್ನಬಸವಣ್ಣ
ಆಡಿ ಕಾಲು ದಣಿಯವು, ನೋಡಿ ಕಣ್ಣು ದಣಿಯವು, ಹಾಡಿ ನಾಲಿಗೆ ದಣಿಯದು, ಇನ್ನೇವೆನಿನ್ನೇವೆ. ನಾ ನಿಮ್ಮ ಕೈಯಾರೆ ಪೂಜಿಸಿ ಮನದಣಿಯಲೊಲ್ಲದಿನ್ನೇವೆನಿನ್ನೇವೆ ಕೂಡಲಸಂಗಮದೇವಾ ಕೇಳಯ್ಯಾ, ನಿಮ್ಮ ಉದರವ ಬಗಿದಾನು ಹೊಗುವ ಭರವೆನಗೆ.
--------------
ಬಸವಣ್ಣ
ನೋಡಿರೆ ನೋಡಿರೆ ಒಂದು ವಿಚಿತ್ರವ. ಶಿಷ್ಯನೆಂಬ ಹೆಂಡತಿಯ ಶ್ರೀಗುರುವೆಂಬ ಗಂಡನು ಹಸ್ತಮಸ್ತಕಸಂಯೋಗವೆಂಬ ಕೂಟವ ಕೂಡಲು, ಜಿಹ್ವೆಯೆಂಬ ಮೇಢ್ರದಲ್ಲಿ ಷಡಕ್ಷರಮಂತ್ರವೆಂಬ ವೀರ್ಯವು ಚಲನೆಯಾಗಿ, ಆ ಶಿಷ್ಯನೆಂಬ ಹೆಂಡತಿಯ ಕರ್ಣವೆಂಬ ಗರ್ಭಪ್ರವೇಶವಾಗಲು, ಮನ ಬಸುರಾಗಿ, ಕಂಗಳೆಂಬ ಯೋನಿಯಲ್ಲಿ ಲಿಂಗವೆಂಬ ಮಗನ ಹಡೆದು, ಅಂಗೈಯೆಂಬ ತೊಟ್ಟಿಲಲ್ಲಿಕ್ಕಿ ಮಂಗಳಸ್ತೋತ್ರವೆಂಬ ಜೋಗುಳವ ಹಾಡಿ, ಅಖಂಡೇಶ್ವರನೆಂಬ ಹೆಸರಿಟ್ಟರು ನೋಡಾ ! ಇದು ಕಾರಣ, ನೀವೀಗವೆನಗೆ ಮಗನಾದಿರಿ, ನಾ ನಿಮಗೆ ತಾಯಾದೆನಯ್ಯಾ ಅಖಂಡೇಶ್ವರಾ.
--------------
ಷಣ್ಮುಖಸ್ವಾಮಿ
ಹರಹರಯೆಂದು ನೆನೆದಡೆ ಜನನ ಮರಣ ಹಿಂಗುವದೆ ? ಹಾಂಗೆ ಲೋಕದ ಮಾತ ಕೇಳಲಾಗದು. ಅದು ಹೇಂಗೆಯೆಂದಡೆ : ಜ್ಯೋತಿಯ ನೆನೆದಡೆ ತಿಮಿರ ಹೋಹುದೇನಯ್ಯಾ ? ಪಂಚಾಮೃತವ ನೆನೆದಡೆ ಹಸಿವು ತೃಷೆ ಅಡಗುವುದೇನಯ್ಯಾ ? ಆಗಮಶಾಸ್ತ್ರವ ನೋಡಿದಡೆ, ಕಿವಿಗೊಟ್ಟು ಕೇಳಿ ಹಾಡಿ ಪಾಡಿದಡೆ, ಅಯ್ಯಾ ನಿಮ್ಮ ಕಂಡಂತಾಯಿತ್ತಯ್ಯಾ ಎಂದುದಾಗಿ, ಆದಡಾಗಲಿ ಕಂಡು ಆಡುವುದಲ್ಲದೆ, ಕಾಣದೆ ಆಡುವುದೆಲ್ಲ ಸಂತೆಯಾಗಿ ಹೋಯಿತ್ತಯ್ಯ ಕಾಣಾ, ಜಂಗಮಲಿಂಗಪ್ರಭುವೆ.
--------------
ಜಂಗಮಲಿಂಗ ಪ್ರಭುವೆ
ಶಿವಾಶ್ರಯದಲ್ಲಿ ಜನಿಸಿ ಭವಾಶ್ರಯವ ನೆನೆವ ಭಂಡರ ಮುಖವ ನೋಡೆ ನೋಡೆ. ಶಿವಾಶ್ರಯವೆ ಶ್ರೀಗುರುನಾಥನ ಕರಕಮಲವೆಂಬ ಪರಿ. ಭವಾಶ್ರಯವೆ ತನ್ನ ಹಿಂದಣ ಪೂರ್ವದ ಭವಿ ತಾಯಿ ತಂದೆ ಬಂಧು ಬಳಗವೆಂಬ ಪರಿ. ಇದು ಕಾರಣ ಗುರುಕರಜಾತನಾಗಿ ನರರ ಹೆಸರ ಹೇಳಿ ಹಾಡಿ ಹೊಗಳಿಸುವ ನರಕಿ ಭವಿಯ ಎನಗೊಮ್ಮೆ ತೋರದಿರಾ. ಆ ಕುಲಗೆಟ್ಟ ಹೊಲೆಯರ ಮುಖವ ನೋಡಲಾಗದು ಅಖಂಡ ಪರಿಪೂರ್ಣ ಘನಲಿಂಗಗುರು ಚೆನ್ನಬಸವೇಶ್ವರ ಶಿವಸಾಕ್ಷಿಯಾಗಿ.
--------------
ಕುಷ್ಟಗಿ ಕರಿಬಸವೇಶ್ವರ
ನಿಃಕಳ ನಿರುಪಮ ತೇಜೋಮಯ ನಿರಂಜನಲಿಂಗದ ನೆನಹಿನ ಮಹಾಘನ ಮಹತ್ವವನುಳ್ಳ ಮಹಾಂತ ಅಖಂಡಪರಶಿವನೊಳಗೆ ಷಡ್‍ವಕ್ತ್ರವನುಳ್ಳ ಪರಬ್ರಹ್ಮವಿರ್ಪುದು, ಆ ಪರಬ್ರಹ್ಮದಲ್ಲಿ ಬ್ರಹ್ಮಾಂಡವಿರ್ಪುದು, ಆ ಬ್ರಹ್ಮಾಂಡದೊಳಗೆ ಸಕಲ ಸ್ಥಿರಚರಪ್ರಾಣಿಗಳಿರ್ಪುವು. ಆ ಪ್ರಾಣಿಗಳ ಸತ್ಕರ್ಮ ದುಷ್ಕರ್ಮದಿಂದಾದ ಪುಣ್ಯ ಪಾಪಂಗಳಿಂದೆ ಬಂದ ಸುಖದುಃಖಂಗಳನುಂಡು ಸೃಷ್ಟಿ ಸ್ಥಿತಿ ಲಯಕ್ಕೊಳಗಾಗಿ ಅನಂತಕಾಲ ಎಂಬತ್ತುನಾಲ್ಕುಲಕ್ಷ ಜೀವರಾಶಿಯೋನಿಯಲ್ಲಿ ಬರುತಿರ್ಪುದು. ಆ ಬರುವದರೊಳಗೆ ಸತ್ಕರ್ಮದಿಂದ ಪುಣ್ಯವೊದಗಿ ಮಾನವಜನ್ಮ ಬರಲು ಈ ಮಾನವಜನ್ಮದ ಅಜ್ಞಾನಕ್ಕೆ ಆ ಮಹಾಮಹಾಂತ ಪರಿಮಳವನೊಳಕೊಂಡು ಮಹಾಂತಮಾರುತ ಸುಳಿಯಲು ಆ ಮಾರುತನ ಸೋಂಕಿಗೆ ಆ ಅಜ್ಞಾನ ಸುಜ್ಞಾನವಾಯಿತ್ತು. ಆ ಸುಜ್ಞಾನದಿಂದೆ ಸತ್ಕರ್ಮವ ಮಾಡಲು ಸಾಧುರಸಂಗವು ದೊರಕಿತ್ತು. ಆ ಸಾಧುರಸಂಗದಿಂದ ಸುಗುಣ ಅಳವಟ್ಟಿತ್ತು. ಆ ಸುಗುಣ ಅಳವಟ್ಟಲ್ಲಿ ಸಂಸಾರ ಹೇಯವಾಯಿತ್ತು. ಆ ಸಂಸಾರ ಹೇಯವಾದಲ್ಲಿ ಮುಕ್ತನಾಗಬೇಕೆಂಬೋ ಚಿಂತೆ ತಲೆದೋರಿತ್ತು. ಆ ಚಿಂತಾಪರವಶದಿಂದೆ ದುಃಖಗೊಂಡಿರಲು ಆ ಮಹಾಂತಪರಿಮಳವನೊಳಕೊಂಡು, ಮಹಾಂತಮಾರುತನೆಂಬ ಪ್ರಭುವೇ ತಾ ಮುನ್ನ ಸೋಂಕಿದ್ದಕ್ಕೆ ತನ್ನ ಬಯಸುವ ಶಿಷ್ಯನಲ್ಲಿಗೆ ತಾನೇ ಗುರುವಾಗಿ ಬಂದು, ಮೋಕ್ಷವಾಸನಿಗೆ ಅವಸ್ಥೆಯೊಳಗಿದ್ದ ಶಿಷ್ಯನ ಸಂತೈಸಿ, ಮಹಾಂತಪರಿಮಳವನುಳ್ಳ ಮುಕ್ತಿಫಲವಾಗುವ ಘನವೆಂಬ ಪುಷ್ಪಕ್ಕೆ ಮೂಲನೆನವಾದ ಮನವೆಂಬ ಲಿಂಗದಲ್ಲಿ ನಿಃಕಲವೇ ನಾನು, ನಾನೇ ನೀನು. ಹೀಗೆಂಬುವುದ ಉಸುರದೆ ಮರೆಗೈದು, ಆ ಲಿಂಗಮಂ ಪರಿಪೂರ್ಣವಾದ ಕರಕಮಲಕ್ಕೆ ಕೊಟ್ಟು ಮನವೆಂಬ ಲಿಂಗದ ನೆನವೆಂಬ ಬಳ್ಳಿಯೇ ಜಂಗಮವೆಂದು ತೋರಿ, ಆ ಬಳ್ಳಿಯ ಬೊಡ್ಡಿಯ ತಂಪು ಪಾದೋದಕವು. ಆ ಆನಂದ ತಂಪ್ಹಿಡಿಯುವುದಕ್ಕೆ ಮಡಿಯಾದ ಮೃತ್ತಿಕೆಯು ನಿರಂಜನಪ್ರಸಾದ. ಆ ಮೃತ್ತಿಕೆಗೆ ಒಡ್ಡಾದ ತೇಜೋಮಯವೇ ವಿಭೂತಿ, ಆ ತೇಜಸ್ಸು ಲಿಂಗಪೂಜೆಯೇ ರುದ್ರಾಕ್ಷಿ, ಆ ತೇಜಸ್ಸು ಲಿಂಗಸ್ಫುಟನಾದವೇ ನಿರುಪಮಮಂತ್ರ, ಇಂತೀ ಅಷ್ಟಾವರಣ ಘಟ್ಟಿಗೊಂಡು ಪೂಜಿಸಲಾಗಿ ಆ ಶಿಷ್ಯನು ಗುರುವ ಹಾಡಿ, ಲಿಂಗವ ನೋಡಿ, ಜಂಗಮವ ಪೂಜಿಸಿ, ಪಾದೋದಕವನ್ನುಪಾರ್ಜಿಸಿ, ಪ್ರಸಾದವನುಂಡು, ವಿಭೂತಿಯ ಲೇಪಿಸಿಕೊಂಡು, ರುದ್ರಾಕ್ಷಿಯ ಧರಿಸಿಕೊಂಡು, ಮಂತ್ರವ ಚಿತ್ತದೊಳಿರಿಸಿ ಆಚರಿಸಲು, ಆ ಶಿಷ್ಯನ ಕಾಯ ಆ ಗುರುವನಪ್ಪಿ ಸದ್ಗುರುವಾಯಿತ್ತು. ಮನವು ಲಿಂಗವ ಕೂಡಿ ಘನಲಿಂಗವಾಯಿತ್ತು. ಪ್ರಾಣ ಜಂಗಮವ ಮರೆಗೊಂಡು ನಿಜಜಂಗಮವಾಯಿತ್ತು. ತೃಷೆ ಪಾದೋದಕದಲ್ಲಿ ಮುಳುಗಿ ಆನಂದಪಾದೋದಕವಾಯಿತ್ತು. ಹಸಿವು ಪ್ರಸಾದದಲ್ಲಡಗಿ ಪ್ರಸಿದ್ಧಪ್ರಸಾದವಾಯಿತ್ತು. ಚಂದನ ವಿಭೂತಿಯಲ್ಲಿ ಸತ್ತು ಚಿದ್ವಿಭೂತಿಯಾಯಿತ್ತು. ಶೃಂಗಾರ ರುದ್ರಾಕ್ಷಿಯಲ್ಲಿ ಕರಗಿ ಏಕಮುಖರುದ್ರಾಕ್ಷಿಯಾಯಿತ್ತು. ಚಿತ್ತ ಮಂತ್ರದಲ್ಲಿ ಸಮರಸವಾಗಿ ಮೂಲಮಂತ್ರವಾಯಿತ್ತು. ಇಂಥಾ ಮೂಲಮಂತ್ರವೇ ಬ್ರಹ್ಮಾಂಡ, ಪಿಂಡಾಂಡ, ಸ್ಥಿರ, ಚರ, ಸಮಸ್ತಕ್ಕೆ ಕಾರಣ ಚೈತನ್ಯಸೂತ್ರವಾಗಿ ಅಂತರಂಗ ನಿವೇದಿಸಲು, ಅಲ್ಲಿ ಅಂತರಂಗದಲ್ಲಿ ತೋರುವ ಆರುಸ್ಥಲ, ಆರುಚಕ್ರ, ಆರುಶಕ್ತಿ, ಆರುಭಕ್ತಿ, ಆರುಲಿಂಗ, ಆರಾರು ಮೂತ್ತಾರು, ಇನ್ನೂರಾಹದಿನಾರು ತೋರಿಕೆಗೆ ಆ ಮೂಲಮಂತ್ರ ತಾನೇ ಕಾರಣ ಚೈತನ್ಯಸೂತ್ರವಾಗಿ ಕಾಣಿಸಲು ಸಮ್ಯಜ್ಞಾನವೆನಿಸಿತು. ಆ ಸಮ್ಯಜ್ಞಾನಬೆಳಗಿನೊಳಗೆ ಮುದ್ರೆ ಸಂಧಾನ ವಿವರ ವಿಚಾರದಿಂದೆ ಷಟ್ತಾರೆಗಳ ಸ್ವರೂಪದ ಆರುಭೂತ, ಆರುಮುಖ, ಆರುಹಸ್ತ, ಆರುಪ್ರಸಾದ, ಆರುತೃಪ್ತಿ, ಆರು ಅಧಿದೇವತೆ ಮೊದಲಾದ ಆರಾರು ಮೂವತ್ತಾರು ಇನ್ನೂರಾಹದಿನಾರು ಅನಂತ ತೋರಿಕೆಯೆಲ್ಲಾ ಮಂತ್ರಸ್ವರೂಪವೇ ಆಗಿ ತೋರಿದಲ್ಲಿ ತತ್ವಜ್ಞಾನವಾಯಿತು. ಒಳಗೇಕವಾದ ತತ್ವಜ್ಞಾನವು ಹೊರಗೆ ನೋಡಲು ಹೊರಗೇಕವಾಗಿ ತೋರಿತು. ಒಳಹೊರಗೆಂಬಲ್ಲಿ ನಡುವೆಂಬುದೊಂದು ತೋರಿತು. ಈ ಮೂರು ಒಂದೇ ಆಗಿ, ಒಂದೇ ಬ್ಯಾರೆ ಬ್ಯಾರೆ ಸ್ಥೂಲ ಸೂಕ್ಷ್ಮ ಕಾರಣ ಮೂರಾದಲ್ಲಿ ಆತ್ಮಜ್ಞಾನವಾಯಿತು. ಆ ಆತ್ಮಜ್ಞಾನದಿಂದ ಆತ್ಮಾನಾತ್ಮ ವಿಚಾರ ಗಟ್ಟಿಗೊಂಡಲ್ಲಿ ಮಹಾಜ್ಞಾನಪ್ರಕಾಶವಾಯಿತು. ಆ ಮಹಾಜ್ಞಾನದಿಂದೆ ಅನುಭವದ ದೃಷ್ಟಿಯಿಡಲು ಬೊಂಬೆಸೂತ್ರ ಆಡಿಸುವವನಂತೆ ಬ್ಯಾರೆ ಬ್ಯಾರೆ ಕಾಣಿಸಲು ಈ ಬೊಂಬೆಯ ಸೂತ್ರ ಆಡಿಸುವವನು ಇವು ಮೂರು ಎಲ್ಲಿಹವು, ಏನೆಂದು ತೂರ್ಯವೇರಿ ಸೂರೆಗೊಂಡಲ್ಲಿ ಸ್ವಯಂಬ್ರಹ್ಮವೆನಿಸಿತ್ತು. ಆ ಸ್ವಯಂಬ್ರಹ್ಮಜ್ಞಾನವು ತನ್ನ ತಾ ವಿಚಾರಿಸಲು ತನ್ನೊಳಗೆ ಜಗ, ಜಗದೊಳಗೆ ತಾನು, ತಾನೇ ಜಗ, ಜಗವೇ ತಾನೆಂಬಲ್ಲಿ ನಿಜಜ್ಞಾನವಾಯಿತು. ಆ ನಿಜಜ್ಞಾನದಿಂದೆ ನಿಜವರಿಯಲು ಆ ನಿಜದೊಳಗೆ ತಾನೇ ಜಗ, ಜಗದೊಳಗೆ ತಾನೇ ಎಂಬೋ ಎರಡಿಲ್ಲದೆ ತಾನೆ ತಾನೆಂಬೊ ಅರುವಾಯಿತು. ಆ ಅರುವು ಮರೆಗೊಂಡು ಕುರುಹು ಉಲಿಯದೆ ನಿರ್ಬೈಲಾಗಲು ಮಹಾಂತನೆಂಬ ಹೆಸರಿಲ್ಲದೆ ಹೋಗಿ ಏನೋ ಆಯಿತ್ತು ನಿರುಪಮ ನಿರಾಳ ಮಹತ್ಪ್ರಭು ಮಹಾಂತಯೋಗಿ.
--------------
ಮಡಿವಾಳಪ್ಪ / ಕಡಕೋಳ ಮಡಿವಾಳಪ್ಪ
ರಚನೆ ರಂಜಕವ ನುಡಿವಾತ ಜಂಗಮವಲ್ಲ. ನರರ ಹೊಗಳಿ ಹಾಡಿ ಬೇಡುವಾತ ಜಂಗಮವಲ್ಲ. ನರರ ಕೈವಾರಿಸುವಾತ ಜಂಗಮವಲ್ಲ. ಇದು ಕಾರಣ_ಕೂಡಲಚೆನ್ನಸಂಗಯ್ಯನಲ್ಲಿ ಪ್ರಭುವೇ ಜಂಗಮ, ಬಸವಣ್ಣನೇ ಭಕ್ತ.
--------------
ಚನ್ನಬಸವಣ್ಣ
ಅಂಗವೆಂಬ ವಾಕುಳದ ಕುಂಭದಲ್ಲಿ ತೋರಿ ಅಡಗುವ ಮರೀಚಿಕಾ ಜಲವ ತುಂಬಿದಂತೆ. ಚಿತ್ತ ಸಾಳಿವನವೆಂಬ ತಂಡುಲ ತೊಳೆಯದೆ, ಥಳಿಸದೆ, ಕುಂಭದೊಳಗೆ ಹಾಕಿ ವಾಯುವಿನ ದೂಮ್ರದಿಂದ ಬೇಯಿಸಿ ಅದು ಬೆಂದುದಿಲ್ಲ. ಅದು ಮೂರು ಗುಂಡಿನ ಗುಣದಿಂದ ಗುಂಡಿನ ಚಂದ ತುಂಬಿಹ ಮಡಕೆಯಂತೆ. ಮತ್ತೊಂದರ ಇರವು ತಿರುಗುವ ಚಕ್ರದಗೊಂದಣದಂದದ ದ್ವಂದ್ವವ, ಹಿಂಗಿ ನಿಂದ ಕುಂದಿನಿರವು, ಕೂರಲಗಿನ ಬಾಯ ಧಾರೆಯಂತೆ ಉಭಯವ ಕೂಡಿಕೊಂಡು ನಿಂದ ಗುಂಡು. ಇದು ಬೇಯದು, ಮಡಕೆಯನೊಡೆ, ಜಲವ ತಡಹು, ತಂಡುಲವ ಚೆಲ್ಲು, ಮಾರುತನ ಬೆಂಕಿಯ ಕೆಡಿಸು, ಓಗರದೂಟದ ಬಿಡು, ಭವಸಾಗರದ ಸಾಧನೆಯನೆ ಗೈ, ಕಾಹುರದ ಕಮ್ಮಟವ ಪರರುವ ಬೋಧಿಸುವ ರಸನವ ಕೀಳು, ಕಿತ್ತ ಮತ್ತೆ ಇನ್ನರಿ. ಸಕಲೇಂದ್ರಿಯದ ಹುತ್ತದ ಹಾವ ಹಾಡಿ. ಮೊತ್ತದ ಮನೆ ವಿಕಾರದ ಚಿತ್ತದ ಹುಲಿಯ ಮುರಿ. ಭಕ್ತಿಗೆ ಸಹ ಕರ್ತುವ ಚಿತ್ತದಲ್ಲಿ ಅಚ್ಚೊತ್ತಿದಂತಿರು. ಸಚ್ಚಿದಾನಂದ ಹೃದಯಪೂರಿತನಾಗಿ ಬೆಚ್ಚಂತಿರು. ವಿರಳವಿಲ್ಲದೆ ಅವಿರಳನಾಗಿ ಎನಗೊಂದು ತೊಡುಗೆಯಿಲ್ಲ, ನಿನ್ನಡಿಯಲ್ಲಿ ಅಡಗಿದೆನಾಗಿ ನಿನ್ನ ಒಡಗೂಡುವ ಕಡೆಯಾವುದು? ಎನ್ನ ಕಾಯಕದ ಬಿಡುವಾವುದು? ಅಂದಾಡಿದ ಮಾತಿನ ಕಡಿವೆಂಗೆ ಬಂದ ಮೊಡತದ ನಗೆಯ ಕಾಯಕ ಸಂದಿತ್ತು. ನಿನ್ನಯ ಕೂಪಳ ಬಯಲಾಗಿ ಅಜಾತನೆ ಸಲಹು, ಆತುರವೈರಿ ಮಾರೇಶ್ವರಾ.
--------------
ನಗೆಯ ಮಾರಿತಂದೆ
ಇನ್ನಷ್ಟು ... -->