ಅಥವಾ

ಒಟ್ಟು 202 ಕಡೆಗಳಲ್ಲಿ , 35 ವಚನಕಾರರು , 130 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಪೃಥ್ವಿ ಅಪ್ಪುವಿನ ಸಂಗದಲ್ಲಿ, ಅನಲ ಅನಿಲವೆಂಬ ಪುತ್ಥಳಿ ಹುಟ್ಟಿತ್ತು. ಆ ಪುತ್ಥಳಿಯ ಗರ್ಭದಲ್ಲಿ, ಆಕಾಶ ಮಹದಾಕಾಶವೆಂಬ ಕುರುಹುದೋರಿತ್ತು. ಅದು ನಾದಪೀಠ ಬಿಂದುಲಿಂಗ ಕಳೆ ವಸ್ತುವಾಗಿ, ಹೊಳಹುದೋರುತ್ತದೆ. ಆ ಹೊಳಹು ಆರುಮೂರಾದ ಭೇದವ ತಿಳಿದು, ಮೂರು ಏಕವಾದಲ್ಲಿ, ಐಕ್ಯವನರಿತಲ್ಲಿ, ನಾದಬಿಂದುಕಳೆಭೇದವಿಲ್ಲ, ನಿಃಕಳಂಕ ಮಲ್ಲಿಕಾರ್ಜುನಾ.
--------------
ಮೋಳಿಗೆ ಮಾರಯ್ಯ
ನಾ ಹುಟ್ಟಿದಲ್ಲಿ ಸಂಸಾರ ಹುಟ್ಟಿತ್ತು. ಸಂಸಾರ ಹುಟ್ಟಿದಲ್ಲಿ ಅಜ್ಞಾನ ಹುಟ್ಟಿತ್ತು. ಅಜ್ಞಾನ ಹುಟ್ಟಿದಲ್ಲಿ ಆಶೆ ಹುಟ್ಟಿತ್ತು. ಆಶೆ ಹುಟ್ಟಿದಲ್ಲಿ ಕೋಪ ಹುಟ್ಟಿತ್ತು. ಆ ಕೋಪಾಗ್ನಿಯ ತಾಮಸಧೂಮ್ರ ಮುಸುಕಿದಲ್ಲಿ ನಾ ನಿಮ್ಮ ಮರೆದು ಭವದುಃಖಕ್ಕೀಡಾದೆ. ನೀ ಕರುಣದಿಂದೆತ್ತಿ ಎನ್ನ ಮರಹ ವಿಂಗಡಿಸಿ ನಿಮ್ಮ ಪಾದವನರುಹಿಸಯ್ಯಾ, ಚೆನ್ನಮಲ್ಲಿಕಾರ್ಜುನಾ.
--------------
ಅಕ್ಕಮಹಾದೇವಿ
ಕುಂಡಲಿಯೆಂಬ ಆಧಾರದಲ್ಲಿ ಜಲ ತೇಜ ವಾಯುವೆಂಬ ತ್ರಿವಿಧ ಕೂಡಿ ಕಮಂಡಲ ಹುಟ್ಟಿತ್ತು. ಅದಕ್ಕೆ ಬಾಯಿ ಮೂರು ಹೆಡೆಯಾರು. ಜೂಳಿಯೊಂದರಲ್ಲಿ ಉದಕವ ಕೊಳುತಿರಲಾಗಿ ಆ ಹಸುವಿನ ತೃಷೆಯಡಗಿ ಬಯಕೆ ಸಲೆ ಬತ್ತಿದಲ್ಲಿ ಮಹಾಗಣನಾಥನ ಐವತ್ತೆರಡು ಸರ ಹರಿದವು. ಮೂವತ್ತಾರು ಮಣಿ ಕೆಟ್ಟವು; ಇಪ್ಪತ್ತೈದು ಮಣಿ ಪುಂಜವಾಯಿತ್ತು. ಆರು ನಾಯಕರತ್ನ ಎಲ್ಲಿ ಅಡಗಿತ್ತೆಂದರಿಯೆ. ಮೂರು ರತ್ನವ ಕಂಡೆ: ಒಂದು ಉಲಿವುದು, ಒಂದು ಉರಿವುದು, ಒಂದು ಬೆಳಗು ನಂದಿಹುದು. ಇಂತೀ ತ್ರಿವಿಧಂಗವ ಕಂಡು ಈ ಅಂಗದ ಮಣಿಯ ಒಂದೊಂದ ಪೋಣಿಸಲಾರದೆ ಈ ದಿನಮಣಿಯ ವಿರಳವ ತೋರಿಸಾ ಗೋರಕ್ಷಪಾಲಕ ಮಹಾಪ್ರಭು ಸಿದ್ಧಸೋಮನಾಥಲಿಂಗವೆ.
--------------
ಗೋರಕ್ಷ / ಗೋರಖನಾಥ
ಮುಖದಿಂದ ಹುಟ್ಟಿಪ್ಪ ಮೂರರ್ಪಿತೋದಕದ ಒಳಗೆ, ಹುಟ್ಟಿತ್ತು ಶುದ್ಧ ಪ್ರಸಾದೋದಕ. ಸದಮಲ ಜಾÐನದಂಘ್ರಿಯಲ್ಲಿ ಹುಟ್ಟಿತ್ತೊಂದುದಕ. ಅದನು ಒಯ್ದೆರೆದಲ್ಲಿ ಉದ್ಭವಿಸಿತ್ತು ತಾ ಕರಣೇಂದ್ರಿಯವನತಿಗಳೆದು ಹತ್ತನೆಯ ಪಾದೋದಕ ಕ್ರಮವಿಂತುಟಯ್ಯಾ, ಕಪಿಲಸಿದ್ಧಮಲ್ಲಿಕಾರ್ಜುನಾ.
--------------
ಸಿದ್ಧರಾಮೇಶ್ವರ
ಪ್ರಥಮದಲ್ಲಿ ವಸ್ತು ಅನಿರ್ವಾಚ್ಯವಾಗಿದ್ದಿತ್ತು. ಆ ಅನಿರ್ವಾಚ್ಯವಾಗಿದ್ದ ಪರವಸ್ತು ತನ್ನ ಲೀಲೆಯಿಂದ ತಾನೇ ಪರಬ್ರಹ್ಮವೆಂಬ ನಾಮವಾಯಿತ್ತು ! ಆ ನಾಮವನೆಯ್ದಿ ಕುಳವಾಯಿತ್ತು, ಆ ಕುಳದಿಂದ ಆತ್ಮನೆಂಬ ಲಿಂಗಸ್ಥಲವಾಯಿತ್ತು. ಆ ಸ್ಥಳ ಕುಳದೊಳಗೆಯ್ದಿ ಸ್ಥಳಕುಳವೆಂಬ ಎರಡಿಲ್ಲದೆ ನಿಂದಿತ್ತು. ಅದೆಂತೆಂದಡೆ: ವಾಙ್ಮನಕ್ಕಗೋಚರವಾದ ಪ್ರರಬ್ರಹ್ಮದಿಂದಾಯಿತ್ತು ಭಾವ, ಭಾವದಿಂದಾಯಿತ್ತು ಜ್ಞಾನ, ಜ್ಞಾನದಿಂದಾಯಿತ್ತು ಮನ, ಮನದಿಂದಾಯಿತ್ತು ಬುದ್ಧಿ, ಬುದ್ಧಿಯಿಂದಾಯಿತ್ತು ಚಿತ್ತ, ಚಿತ್ತದಿಂದಾಯಿತ್ತು ಅಹಂಕಾರ. ಇಂತು_ಅಹಂಕಾರ ಚಿತ್ತ ಬುದ್ಧಿ ಮನ ಜ್ಞಾನ ಭಾವ ಎಂದು ಆರಾದವು. ಈ ಆರೂ ಕೆಟ್ಟಲ್ಲದೆ ವಾಙ್ಮನಕ್ಕಗೋಚರವಾದ ಪರಬ್ರಹ್ಮವಾಗಬಾರದು. ಇದ ಕೆಡಿಸುವುದಕ್ಕೆ ಆರು ಸ್ಥಲವಾದವು. ಅವಾವೆಂದಡೆ: ಅಹಂಕಾರ ಅಡಗಿದಾಗ ಭಕ್ತಸ್ಥಲ, ಚಿತ್ತದ ಗುಣ ಕೆಟ್ಟಾಗ ಮಾಹೇಶ್ವರಸ್ಥಲ ಬುದ್ಧಿಯ ಗುಣ ಕೆಟ್ಟಾಗ ಪ್ರಸಾದಿಸ್ಥಲ, ಮನೋಗುಣ ಅಳಿದಾಗ ಪ್ರಾಣಲಿಂಗಸ್ಥಲ, ಜೀವನ ಗುಣ ಸಂದಾಗ ಶರಣ ಸ್ಥಲ ಭಾವ ನಿರ್ಭಾವವಾದಾಗ ಐಕ್ಯಸ್ಥಲ. ಇಂತು ಷಟ್ಸ್ಥಲವಾಗಿ ವಾಙ್ಮನಕ್ಕೆ ಅಗೋಚರವಾದ ಬ್ರಹ್ಮವೆ ಆತ್ಮನು. ಆ ಆತ್ಮನಿಂದ ಆಕಾಶ ಹುಟ್ಟಿತ್ತು, ಆ ಆಕಾಶದಿಂದ ವಾಯು ಹುಟ್ಟಿತ್ತು. ಆ ವಾಯುವಿನಿಂದ ಅಗ್ನಿ ಹುಟ್ಟಿತ್ತು, ಆ ಅಗ್ನಿಯಿಂದ ಅಪ್ಪು ಹುಟ್ಟಿತ್ತು. ಆ ಅಪ್ಪುವಿನಿಂದ ಪೃಥ್ವಿ ಹುಟ್ಟಿತ್ತು. ಇಂತು_ಕುಳಸ್ಥಳವಾಗಿ ಸ್ಥಳಕುಳವಾದ ವಿವರವೆಂತೆಂದಡೆ: ಪೃಥ್ವಿ ಅಪ್ಪುವಿನೊಳಡಗಿ, ಅಪ್ಪು ಅಗ್ನಿಯೊಳಡಗಿ, ಅಗ್ನಿ ವಾಯುವಿನೊಳಡಗಿ, ವಾಯು ಆಕಾಶದೊಳಡಗಿ, ಆಕಾಶ ಆತ್ಮನೊಳಡಗಿತ್ತು, ಆತ್ಮ ಪರಶಿವನಲ್ಲಿ ಅಡಗಿತ್ತು ! ಇಂತು_ಷಡಂಗವಡಗಿದ ಪರಿ ಎಂತೆಂದಡೆ: ``ಪೃಥ್ವೀ ಭವೇತ್ ಜಲೇ, ಜಲೇ ಮಗ್ನಾಜಲಂ ಗ್ರಸ್ತಂ ಮಹಾಗ್ನಿನಾ ವಾಯೋರಸ್ತಮಿತಂ ತೇಜೋ ವ್ಯೋಮ್ನಿ ವಾತೋ ವಿಲೀಯತೇ ವ್ಯೋಮ್ಯೋತ್ಮನಿ ವಿಲೀನಂ ಸ್ಯಾತ್ ಆತ್ಮಾ ಪರಶಿವೇ ಪದೇ'' _ ಎಂದುದಾಗಿ ಆತ್ಮನು ಪರಬ್ರಹ್ಮದೊಳಡಗಿ ನಿಂದಿತ್ತು ಗುಹೇಶ್ವರಾ.
--------------
ಅಲ್ಲಮಪ್ರಭುದೇವರು
ಪಂಚಾಕ್ಷರವೆ ಶಿವನ ಪಂಚಮುಖದಿಂದಲುದಯವಾಗಿ ಪಂಚತತ್ವಸ್ವರೂಪವಾಯಿತ್ತು ನೋಡಾ. ಆ ಪಂಚಸ್ವರೂಪಿಂದಲೆ ಬ್ರಹ್ಮಾಂಡ ನಿರ್ಮಿತವಾಯಿತ್ತು. ಆ ಬ್ರಹ್ಮಾಂಡದಿಂದ ಪಿಂಡಾಂಡ ನಿರ್ಮಿತವಾಯಿತ್ತು. ಅದು ಎಂತೆಂದರೆ ಹೇಳುವೆ ಕೇಳಿರಣ್ಣಾ : ಸದ್ಯೋಜಾತಮುಖದಲ್ಲಿ ನಕಾರ ಪುಟ್ಟಿತ್ತು , ಆ ನಕಾರದಿಂದ ಪೃಥ್ವಿ ಪುಟ್ಟಿತ್ತು , ವಾಮದೇವಮುಖದಲ್ಲಿ ಮಕಾರ ಪುಟ್ಟಿತ್ತು. ಆ ಮಕಾರದಿಂದ ಅಪ್ಪು ಪುಟ್ಟಿತ್ತು , ಅಘೋರಮುಖದಲ್ಲಿ ಶಿಕಾರ ಜನನ. ಆ ಶಿಕಾರದಿಂದ ಅಗ್ನಿ ಪುಟ್ಟಿತ್ತು , ತತ್ಪುರುಷಮುಖದಲ್ಲಿ ವಕಾರ ಪುಟ್ಟಿತ್ತು , ಆ ವಕಾರದಿಂದ ವಾಯು ಪುಟ್ಟಿತ್ತು , ಈಶಾನಮುಖದಲ್ಲಿ ಯಕಾರ ಜನನ, ಆ ಯಕಾರದಿಂದ ಆಕಾಶ ಹುಟ್ಟಿತ್ತು , ಈ ಪಂಚತತ್ವಸ್ವರೂಪಿಂದ ಬ್ರಹ್ಮಾಂಡ ನಿರ್ಮಿತವಾಯಿತ್ತು. ಆ ಬ್ರಹ್ಮಾಂಡದಿಂದ ಪಿಂಡಾಂಡ ನಿರ್ಮಿತವಾಯಿತ್ತು. ಹೇಗೆ ನಿರ್ಮಿತವಾಯಿತ್ತೆಂದರೆ, ಪೃಥ್ವಿ ಅಪ್ ತೇಜ ವಾಯು ಆಕಾಶವೆಂಬ ಪಂಚಭೂತಂಗಳಿಂದವೆ ಪಂಚವಿಂಶತಿತತ್ವಂಗಳುತ್ಪತ್ಯವಾದವು. ಆ ಪಂಚವಿಂಶತಿ ತತ್ವಂಗಳಿಂದವೆ ಶರೀರವಾಯಿತ್ತು. ನಕಾರದಿಂದ ಕರ್ಮೇಂದ್ರಿಯಂಗಳ ಜನನ. ಮಕಾರದಿಂದ ಪಂಚವಿಷಯಂಗಳುತ್ಪತ್ಯ. ಶಿಕಾರದಿಂದ ಬುದ್ಧೀಂದ್ರಿಯಗಳು ಜನನ. ವಕಾರದಿಂದ ಐದು ಪ್ರಾಣವಾಯುಗಳ ಜನನ. ಯಕಾರದಿಂದ ಅಂತಃಕರಣಚತುಷ್ಟಯಂಗಳು `ನಮಃ ಶಿವಾಯ' `ನಮಃ ಶಿವಾಯ'ವೆಂಬ ಪಂಚಾಕ್ಷರದಿಂದವೆ ಉತ್ಪತ್ಯವೆಂದು ಹೇಳಲ್ಪಟ್ಟಿತ್ತಯ್ಯ ಪರಮಗುರು ಪಡುವಿಡಿ ಸಿದ್ಧಮಲ್ಲಿನಾಥಪ್ರಭುವೆ.
--------------
ಹೇಮಗಲ್ಲ ಹಂಪ
ಯೋನಿಯಿಲ್ಲದ ಆಕಳಿನಲ್ಲಿ, ಬಾಯಿಯಿಲ್ಲದ ಕರು ಹುಟ್ಟಿತ್ತು. ಮೊಲೆಯಿಲ್ಲದ ಹಾಲ ಕುಡಿದು, ಒಡಲಿಲ್ಲದೆ ತಿರುಗಾಡುತ್ತದೆ. ಏಣಾಂಕಧರ ಸೋಮೇಶ್ವರಲಿಂಗ, ಇದೇನು ಸೋಜಿಗವೆಂದರಿಯೆ.
--------------
ಬಿಬ್ಬಿ ಬಾಚಯ್ಯ
ಹಬ್ಬಕ್ಕೆ ತಂದ ಹರಕೆಯ ಕುರಿ ತೋರಣಕ್ಕೆ ತಂದ ತಳಿರ ಮೇುತ್ತು. ಕೊಂದಹರೆಂಬುದನರಿಯದೆ ಬೆಂದ ಒಡಲ ಹೊರೆವುತ್ತಲದೆ. ಅದಂದೆ ಹುಟ್ಟಿತ್ತು, ಅದಂದೆ ಹೊಂದಿತ್ತು. ಕೊಂದವರುಳಿವರೆ ಕೂಡಲಸಂಗಮದೇವಾ. 129
--------------
ಬಸವಣ್ಣ
ಒಬ್ಬ ತಂದೆಯ ಬಸಿರಿನಲ್ಲಿ ಒಂಬತ್ತು ಮಕ್ಕಳು ಹುಟ್ಟಿದಡೇನಯ್ಯ ? ಅವರೊಳಗೊಬ್ಬಾತಂಗೆ ಸೆರಗ ಕಟ್ಟಿ ಮದುವೆಯ ಮಾಡಿದ ಬಳಿಕ, ಆತಂಗೆ ತನ್ನಂಗದ ಸುಖವನೊಪ್ಪಿಸಬೇಕಲ್ಲದೆ, ಉಳಿದಿರ್ದವರೆಲ್ಲ ತನ್ನ ಮಾವನ ಮಕ್ಕಳೆಂದು ಅವರಿಗೆ ಸೆರಗು ಹಾಸುವವಳನು ಒಪ್ಪುವರೆ ಲೋಕದೊಳು ? ಪರಮಾತ್ಮನೆಂಬ ಶಿವನಿಗೆ ಆಶ್ರಯವಾಗಿ ಹುಟ್ಟಿತ್ತು ಲಿಂಗ, ಆತಂಗೆ ವಾಹನವಾಗಿ ಹುಟ್ಟಿದಾತ ವೃಷಭ, ಆತಂಗೆ ಯೋಗವಾಗಿ ಹುಟ್ಟಿದಾತ ವಿನಾಯಕ, ಆತಂಗೆ ಯುದ್ಧಕ್ಕೆ ಸರಿಯಾಗಿ ಹುಟ್ಟಿದಾತ ವೀರಭದ್ರ. ಇಂತಿವರೆಲ್ಲ ಶಿವನ ಮಕ್ಕಳಾದರೆ, ತನಗೊಂದು ಪ್ರಾಣಲಿಂಗವೆಂದು ಕಂಕಣ ಕಟ್ಟಿ, ಕರಸ್ಥಲಕ್ಕೆ ಬಂದ ಬಳಿಕ ಅದನು ನಂಬಲರಿಯದೆ ಮತ್ತನ್ಯದೈವಕ್ಕೆರಗಿದಡೆ ನಾಯಕನರಕವೆಂದಾತ ನಮ್ಮ ಅಂಬಿಗ ಚೌಡಯ್ಯ.
--------------
ಅಂಬಿಗರ ಚೌಡಯ್ಯ
ಇನ್ನು ಷಡಂಗ ಉತ್ಪತ್ಯವದೆಂತೆಂದಡೆ : ಬ್ರಹ್ಮ ವಿಷ್ಣು ರುದ್ರ ಈಶ್ವರ ಶಿವ ಸದಾಶಿವ ಈ ಆರು ಶಿವಾಂಗವು ಚಿಚ್ಛಕ್ತಿಯೇ ಕಾರಣವಾಗಿ ಹುಟ್ಟಿತ್ತು ನೋಡಾ. ಇದಕ್ಕೆ ಮಹಾವಾತುಲಾಗಮೇ : ``ಬ್ರಹ್ಮಾ ವಿಷ್ಣುಶ್ಚ ರುದ್ರಶ್ಚ ಈಶ್ವರಶ್ಚ ಸದಾಶಿವಃ | ಶಿವಂ ಶಿವಾಂಗಮಿತ್ಯೇತತ್ ಚಿಚ್ಛಕ್ತಿಶ್ಚೈವ ಕಾರಣಂ ||'' ಇಂತೆಂದುದಾಗಿ, ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಇನ್ನೊಂದು ಪ್ರಕಾರದ ಲಿಂಗೋತ್ಪತ್ಯವದೆಂತೆಂದಡೆ : ಮಹಾಲಿಂಗದಲ್ಲಿ ಪ್ರಸಾದಲಿಂಗ ಹುಟ್ಟಿತ್ತು. ಆ ಪ್ರಸಾದಲಿಂಗದಲ್ಲಿ ಜಂಗಮಲಿಂಗ ಹುಟ್ಟಿತ್ತು. ಆ ಜಂಗಮಲಿಂಗದಲ್ಲಿ ಶಿವಲಿಂಗ ಹುಟ್ಟಿತ್ತು. ಆ ಶಿವಲಿಂಗದಲ್ಲಿ ಗುರುಲಿಂಗ ಹುಟ್ಟಿತ್ತು. ಆ ಗುರುಲಿಂಗದಲ್ಲಿ ಆಚಾರಲಿಂಗ ಹುಟ್ಟಿತ್ತು. ಈ ಆರು ಲಿಂಗವು ಒಂದೇ ಲಿಂಗ ನೋಡಾ. ಇದಕ್ಕೆ ಈಶ್ವರ್ದೋವಾಚ : ``ಮಹಾಲಿಂಗ ಸಮಾಖ್ಯಾತಂ ಪ್ರಸಾದಂ ಲಿಂಗಮುದ್ಭವಂ | ತತಃ ಪ್ರಸಾದಲಿಂಗೇ ಚ ಜಂಗಮಂ ಲಿಂಗಮುದ್ಭವಂ || ತಥಾ ಜಂಗಮಲಿಂಗಂ ಚ ಶಿವಲಿಂಗ ಸಮುದ್ಭವಂ | ಶಿವಲಿಂಗ ಯಥಾಚೈವ ಗುರುಲಿಂಗಸಮುದ್ಭವಂ | ಷಟ್ಸ್ಥಲಂ ಚ ಪರಿಜ್ಞೇಯಂ ಏಕೀಭಾವಂ ವಿಶೇಷತಃ ||'' ಇಂತೆಂದುದಾಗಿ, ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಸತ್ಯವೇ ಪರಮನು, ಜ್ಞಾನನವೇ ಜೀವನು, ಆನಂದವೇ ಶರೀರವು. ಅದೆಂತೆಂದೊಡೆ: ಶರೀರಾದಿ ಸಕಲಪ್ರಪಂಚಕ್ಕೂ ಜ್ಞಾನವೇ ಮೂಲವಾಗಿರ್ಪುದು. ಆನಂದಮುಖದೊಳ್ ಬಿಂದು ಜನಿಸಿ, ಆ ಬಿಂದುವೇ ಪೃಥ್ವೀರೂಪದಲ್ಲಿ ಘನೀಭವಿಸಿ, ಪಿಂಡಾಕಾರಮಾಗಿ ಶರೀರಮಪ್ಪಂತೆ, ಜ್ಞಾನಮುಖದಲ್ಲಿ ವಾಯುವು ಜನಿಸಿ, ತೇಜೋರೂಪದಲ್ಲಿ ಘನೀಭವಿಸಿ, ಜೀವನಾರ್ಪುದು. ನಿಜದಲ್ಲಾತ್ಮನು ಜನಿಸಿ, ಆಕಾಶರೂಪದಲ್ಲಿ ಘನೀಭವಿಸಿ ಪರಮನಾಗಿರ್ಪನು. ಆನಂದಬಿಂದುಮುಖದಿಂದ ಅಹಂಕಾರವು ಜನಿಸಿ, ಜ್ಞಾನವಾಯುಗಳ ಸಂಗದಿಂ ಮನವು ಪುಟ್ಟಿತ್ತು. ನಿಜಾತ್ಮಗಳ ಸಂಗದಿಂ ಭಾವವು ಹುಟ್ಟಿತ್ತು. ತತ್ಸಾಧ್ಯಕ್ಕವೇ ಸಾಧನಗಳಾಗಿರ್ಪುದರಿಂ ಇವೇ ಕರಣಂಗಳಾಗಿ, ಅವೇ ಕರಣಂಗಳಾಗಿರ್ಪವು. ಪೃಥ್ವವೀಬೀಜಗಳಸಂಗದಿಂದ ಬೀಜಮಧ್ಯದಲ್ಲಿ ವೃಕ್ಷವು ಜನಿಸಿತ್ತು. ವೃಕ್ಷವು ಬಲಿದಲ್ಲಿ ಬೀಜವು ನಷ್ಟಮಾಗಿ, ತದಗ್ರದಲ್ಲಿರ್ಪ ಫಲಮಧ್ಯದಲ್ಲಿ ಅನೇಕಮುಖಮಾಗಿ ತೋರುತ್ತರ್ಪಂತೆ, ಜ್ಞಾನವಾಯುಗಳಸಂಗದಿಂ ಜ್ಞಾನಮಧ್ಯದಲ್ಲಿ ಮನಸ್ಸು ಹುಟ್ಟಿ, ಅದು ಬಲಿದಲ್ಲಿ. ಆ ಮೂಲಜ್ಞಾನವಳಿದು, ತತ್ಫಲರೂಪಮಾದ ಇಂದ್ರಿಯಮಧ್ಯದಲ್ಲಿ ತೋರುತ್ತಿರ್ಪುದು. ಜಲವು ಆ ಬೀಜವಂ ಭೇದಿಸಿ, ತನ್ಮಧ್ಯದಲ್ಲಿ ವೃಕ್ಷವಂ ನಿರ್ಮಿಸುವಂತೆ, ಮನಸ್ಸೇ ಜಾಗ್ರತ್ಸ್ವರೂಪದಲ್ಲಿ ಜ್ಞಾನಬ್ಥಿನ್ನವಂ ಮಾಡಿ, ತನ್ಮಧ್ಯದಲ್ಲಾನಂದವಂ ನಿರ್ಮಿಸುತ್ತಿರ್ಪುದು. ಆನಂದವೂ ನಿರಾಕಾರವೂ ಬಿಂದುವು ಸಾಕಾರವೂ ಆದುದರಿಂದ ಆನಂದವಂ ಬಿಂದುವು ಬಂದ್ಥಿಸಿರ್ಪಂತೆ, ವಾಯುವು ಜ್ಞಾನವಂ ಬಂದ್ಥಿಸಿರ್ಪುದು. ಆನಂದವು ಜ್ಞಾನದೊಳ್ಬೆರೆದಲ್ಲಿ ಶರೀರವು ಜೀವನಳೈಕ್ಯಮಾಯಿತ್ತು. ಆ ಜ್ಞಾನವು ನಿಜದೊಳ್ಬೆರೆದಲ್ಲಿಜೀವನು ಪರಮನೊಳೈಕ್ಯಮಾಯಿತ್ತು. ನಿಜಾನಂದ ಶಿವಶಕ್ತಿಗಳೇಕಮಾದಲ್ಲಿ ಜ್ಞಾನವದೊರಲಗೆ ಬೆರೆದು, ಭೇದವಡಗಿ ಅವರೆಡರ ಸಂಯೋಗ ವಿಯೋಗಕ್ಕೆ ತಾನೇ ಕಾರಣಮಾಗಿ, ನಿಜಾನಂದವೇ ತೋರುತ್ತಾ, ತಾನೊಪ್ಪುತ್ತಿರ್ಪುದೇ ಲಿಂಗೈಕ್ಯ ಕಾಣಾ ಮಹಾಘನ ದೊಡ್ಡದೇಶಿಕಾರ್ಯಗುರುಪ್ರಭುವೆ.
--------------
ಮುಮ್ಮಡಿ ಕಾರ್ಯೇಂದ್ರ /ಮುಮ್ಮಡಿ ಕಾರ್ಯ ಕ್ಷಿತೀಂದ್ರ
ಕಾಣಬಾರದ ಕದಳಿಯಲೊಂದು ಮಾಣಿಕ ಹುಟ್ಟಿತ್ತು. ಇದಾರಿಗೂ ಕಾಣಬಾರದು. ಮಾರಿಹೆನೆಂದಡೆ ಮಾನವರಿಗೆ ಸಾಧ್ಯವಾಗದು. ಸಾವಿರಕ್ಕೆ ಬೆಲೆಯಾಯಿತ್ತು. ಆ ಬೆಲೆಯಾದ ಮಾಣಿಕ ನಮ್ಮ ಶಿವಶರಣರಿಗೆ ಸಾಧ್ಯವಾಯಿತ್ತು. ಅವರು ಆ ಮಾಣಿಕವ ಹೇಗೆ ಬೆಲೆಮಾಡಿದರೆಂದಡೆ ಕಾಣಬಾರದ ಕದಳಿಯ ಹೊಕ್ಕು, ನೂನ ಕದಳಿಯ ದಾಂಟಿ, ಜಲವ ಶೋಧಿಸಿ, ಮನವ ನಿಲಿಸಿ, ತನುವಿನೊಳಗಣ ಅನುವ ನೋಡುವನ್ನಕ್ಕ, ಮಾಣಿಕ ಸಿಕ್ಕಿತ್ತು. ಆ ಮಾಣಿಕವ ನೋಡಿದೆನೆಂದು ಜಗದ ಮನುಜರನೆ ಮರೆದು, ತಾನುತಾನಾಗಿ ಜ್ಞಾನಜ್ಯೋತಿಯ ಬೆಳಗಿನೊಳಗೋಲಾಡಿ ಸುಖಿಯಾದೆನಯ್ಯಾ, ಅಪ್ಪಣ್ಣಪ್ರಿಯ ಚೆನ್ನಬಸವಣ್ಣಾ. !
--------------
ಹಡಪದಪ್ಪಣ್ಣಗಳ ಪುಣ್ಯಸ್ತ್ರೀ ಲಿಂಗಮ್ಮ
ಅಂಗದ ಕೈಯಲ್ಲೊಂದಂಗವದೆ ನೋಡಾ. ಲಿಂಗದ ಕೈಯಲ್ಲೊಂದು ಲಿಂಗವದೆ ನೋಡಾ. ಈ ಉಭಯದ ಮಧ್ಯದಲ್ಲಿ ಅರಿದ ತಲೆಯ, ಕೈಯಲ್ಲಿ ಹಿಡಿದುಕೊಂಡು, ಮುಂಡ ಉದಯವಾಯಿತ್ತ ಕಂಡೆ. ಅದಕ್ಕೆ ತಲೆಯಲ್ಲಿ ಓಲೆ, ಮುಂಡದಲ್ಲಿ ಮೂಗುತಿ, ಮೂಗಿನಲ್ಲಿ ಕಣ್ಣು, ಕಿವಿಯಲ್ಲಿ ತೋರಣ, ಕಂಗಳ ಮುತ್ತುಸರವ ಪವಣಿಸುವ ಜಾಣೆಯ ಕಣ್ಣ ಕೈಯ ಲಿಂಗಕ್ಕೆ ಮದುವೆಯ ಮಾಡಿದರೆಮ್ಮವರು. ಆ ಲಿಂಗದಿಂದ ರೂಪಲ್ಲದ, ಸೋಂಕಿಲ್ಲದ ಸೊಬಗಿನ ಅಭಿನವ ಶಿಶು ಹುಟ್ಟಿತ್ತು ನೋಡಾ. ಆ ನಾಮವ ಹಿಡಿದು ಕರೆದಡೆ ಕೈಸನ್ನೆ ಮಾಡಿತ್ತು. ನೋಡಿದಡೆ ಮುಂದೆಬಂದು ನಿಂದಿತ್ತು. ಅಪ್ಪಿದಡೆ ಸೋಂಕಿಲ್ಲದೆ ಹೋಯಿತ್ತು. ಅರಸಹೋದಡೆ ಅವಗವಿಸಿತ್ತು. ನಿಜಗುರು ಭೋಗೇಶ್ವರಾ, ಇದರ ಕೌತುಕದ ಕಾರಣವೇನು ಹೇಳಯ್ಯಾ.
--------------
ಭೋಗಣ್ಣ
ಒಂದಾಡಿನ ಕಣ್ಣಿನಲ್ಲಿ ಬಂದವು ಮೂರು ಸಿಂಹ. ಆ ಸಿಂಹದ ಬಾಯ ಸೀಳಿ ಹುಟ್ಟಿದವೈದು ಮದಗಜ. ಗಜದೊಡಲೊಡೆದು ಬರಿ ಕೈಯಲ್ಲಿ ನರಿ ಹುಟ್ಟಿತ್ತು. ನರಿಯ ಉದರದಲ್ಲಿ ಮೊಲ ಹುಟ್ಟಿ, ಆ ಮೊಲ ಮೂವರ ಮೊಲೆಯ ತಿಂದಿತ್ತು. ಮೊಲೆ ಹಲುದಾಗಿ ಮೊಲೆ ಮೊದಲುಗೆಟ್ಟಿತ್ತು, ಸಗರದ ಬೊಮ್ಮನೊಡೆಯ ತನುಮನ ಸಂಗಮೇಶ್ವರಲಿಂಗವು, ಜಗದೊಡಲು ತಾನಾದ ಕಾರಣ.
--------------
ಸಗರದ ಬೊಮ್ಮಣ್ಣ
ಇನ್ನಷ್ಟು ... -->