ಅಥವಾ

ಒಟ್ಟು 330 ಕಡೆಗಳಲ್ಲಿ , 62 ವಚನಕಾರರು , 263 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಅಂಬಿನ ಹಿಳಿಕಿನಲ್ಲಿ ಕಟ್ಟಿದ ವಿಹಂಗನ ಗರಿಯಂತೆ, ತಾಗುವ ಮೊನೆಗಾಧಾರವಾಗಿ ದೂರ ಎಯಿದುವುದಕೆ ಸಾಗಿಸುವ ಗುಣ ತಾನಾಗಿ ಕ್ರೀ ಅರಿವಿನ ಭೇದದ ನೆರಿಗೆಯ ಕಾಬನ್ನಕ್ಕ, ಅರಿವು ಕುರುಹು ಎರಡು ಬೇಕೆಂದನಂಬಿಗ ಚೌಡಯ್ಯ.
--------------
ಅಂಬಿಗರ ಚೌಡಯ್ಯ
ಪ್ರಥಮದಲ್ಲಿ ವಸ್ತು ಅನಿರ್ವಾಚ್ಯವಾಗಿದ್ದಿತ್ತು. ಆ ಅನಿರ್ವಾಚ್ಯವಾಗಿದ್ದ ಪರವಸ್ತು ತನ್ನ ಲೀಲೆಯಿಂದ ತಾನೇ ಪರಬ್ರಹ್ಮವೆಂಬ ನಾಮವಾಯಿತ್ತು ! ಆ ನಾಮವನೆಯ್ದಿ ಕುಳವಾಯಿತ್ತು, ಆ ಕುಳದಿಂದ ಆತ್ಮನೆಂಬ ಲಿಂಗಸ್ಥಲವಾಯಿತ್ತು. ಆ ಸ್ಥಳ ಕುಳದೊಳಗೆಯ್ದಿ ಸ್ಥಳಕುಳವೆಂಬ ಎರಡಿಲ್ಲದೆ ನಿಂದಿತ್ತು. ಅದೆಂತೆಂದಡೆ: ವಾಙ್ಮನಕ್ಕಗೋಚರವಾದ ಪ್ರರಬ್ರಹ್ಮದಿಂದಾಯಿತ್ತು ಭಾವ, ಭಾವದಿಂದಾಯಿತ್ತು ಜ್ಞಾನ, ಜ್ಞಾನದಿಂದಾಯಿತ್ತು ಮನ, ಮನದಿಂದಾಯಿತ್ತು ಬುದ್ಧಿ, ಬುದ್ಧಿಯಿಂದಾಯಿತ್ತು ಚಿತ್ತ, ಚಿತ್ತದಿಂದಾಯಿತ್ತು ಅಹಂಕಾರ. ಇಂತು_ಅಹಂಕಾರ ಚಿತ್ತ ಬುದ್ಧಿ ಮನ ಜ್ಞಾನ ಭಾವ ಎಂದು ಆರಾದವು. ಈ ಆರೂ ಕೆಟ್ಟಲ್ಲದೆ ವಾಙ್ಮನಕ್ಕಗೋಚರವಾದ ಪರಬ್ರಹ್ಮವಾಗಬಾರದು. ಇದ ಕೆಡಿಸುವುದಕ್ಕೆ ಆರು ಸ್ಥಲವಾದವು. ಅವಾವೆಂದಡೆ: ಅಹಂಕಾರ ಅಡಗಿದಾಗ ಭಕ್ತಸ್ಥಲ, ಚಿತ್ತದ ಗುಣ ಕೆಟ್ಟಾಗ ಮಾಹೇಶ್ವರಸ್ಥಲ ಬುದ್ಧಿಯ ಗುಣ ಕೆಟ್ಟಾಗ ಪ್ರಸಾದಿಸ್ಥಲ, ಮನೋಗುಣ ಅಳಿದಾಗ ಪ್ರಾಣಲಿಂಗಸ್ಥಲ, ಜೀವನ ಗುಣ ಸಂದಾಗ ಶರಣ ಸ್ಥಲ ಭಾವ ನಿರ್ಭಾವವಾದಾಗ ಐಕ್ಯಸ್ಥಲ. ಇಂತು ಷಟ್ಸ್ಥಲವಾಗಿ ವಾಙ್ಮನಕ್ಕೆ ಅಗೋಚರವಾದ ಬ್ರಹ್ಮವೆ ಆತ್ಮನು. ಆ ಆತ್ಮನಿಂದ ಆಕಾಶ ಹುಟ್ಟಿತ್ತು, ಆ ಆಕಾಶದಿಂದ ವಾಯು ಹುಟ್ಟಿತ್ತು. ಆ ವಾಯುವಿನಿಂದ ಅಗ್ನಿ ಹುಟ್ಟಿತ್ತು, ಆ ಅಗ್ನಿಯಿಂದ ಅಪ್ಪು ಹುಟ್ಟಿತ್ತು. ಆ ಅಪ್ಪುವಿನಿಂದ ಪೃಥ್ವಿ ಹುಟ್ಟಿತ್ತು. ಇಂತು_ಕುಳಸ್ಥಳವಾಗಿ ಸ್ಥಳಕುಳವಾದ ವಿವರವೆಂತೆಂದಡೆ: ಪೃಥ್ವಿ ಅಪ್ಪುವಿನೊಳಡಗಿ, ಅಪ್ಪು ಅಗ್ನಿಯೊಳಡಗಿ, ಅಗ್ನಿ ವಾಯುವಿನೊಳಡಗಿ, ವಾಯು ಆಕಾಶದೊಳಡಗಿ, ಆಕಾಶ ಆತ್ಮನೊಳಡಗಿತ್ತು, ಆತ್ಮ ಪರಶಿವನಲ್ಲಿ ಅಡಗಿತ್ತು ! ಇಂತು_ಷಡಂಗವಡಗಿದ ಪರಿ ಎಂತೆಂದಡೆ: ``ಪೃಥ್ವೀ ಭವೇತ್ ಜಲೇ, ಜಲೇ ಮಗ್ನಾಜಲಂ ಗ್ರಸ್ತಂ ಮಹಾಗ್ನಿನಾ ವಾಯೋರಸ್ತಮಿತಂ ತೇಜೋ ವ್ಯೋಮ್ನಿ ವಾತೋ ವಿಲೀಯತೇ ವ್ಯೋಮ್ಯೋತ್ಮನಿ ವಿಲೀನಂ ಸ್ಯಾತ್ ಆತ್ಮಾ ಪರಶಿವೇ ಪದೇ'' _ ಎಂದುದಾಗಿ ಆತ್ಮನು ಪರಬ್ರಹ್ಮದೊಳಡಗಿ ನಿಂದಿತ್ತು ಗುಹೇಶ್ವರಾ.
--------------
ಅಲ್ಲಮಪ್ರಭುದೇವರು
ಶಿವತತ್ವ ಐದು ಅವಾವೆಂದಡೆ; ಶಿವ, ಶಕ್ತಿ, ಸಾದಾಖ್ಯ, ಈಶ್ವರ, ಶುದ್ಧ ವಿದ್ಯೆ- ಇಂತು ಶಿವತತ್ವ ಐದು. ಇನ್ನು ವಿದ್ಯಾತತ್ತ್ವವೆಂತೆಂದಡೆ: ಕಲೆ, ರಾಗ, ನಿಯತಿ, ವಿದ್ಯೆ, ಪುರುಷ, ಪ್ರಕೃತಿ - ಇಂತು ವಿದ್ಯಾತತ್ತ್ವ ಏಳು. ಇನ್ನು ಕರಣಂಗಳೆಂತೆಂದಡೆ: ಚಿತ್ತ, ಬುದ್ಧಿ, ಅಹಂಕಾರ, ಮನ - ಇವು ಕರಣತತ್ತ್ವ ನಾಲ್ಕು. ಇನ್ನು ಇಂದ್ರಿಯಂಗಳೆಂತೆಂದಡೆ: ಶ್ರೋತ್ರ, ತ್ವಕ್ಕು, ನೇತ್ರ, ಜಿಹ್ವೆ, ಘ್ರಾಣ - ಇಂತು ಬುದ್ಧೀಂದ್ರಯಂಗಳು ಐದು. ಇನ್ನು ಕರ್ಮೇಂ್ರಯಂಗಳೆಂತೆಂದಡೆ: ವಾಕ್ಕು, ಪಾದ, ಪಾಣಿ, ಗುಹ್ಯ, ಪಾಯು - ಇಂತು ಕರ್ಮೇಂ್ರಯಂಗಳು ಐದು. ಇನ್ನು ತನ್ಮಾತ್ರಂಗಳೆಂತೆಂದಡೆ: ಶಬ್ದ, ಸ್ಪರ್ಶ, ರೂಪು, ರಸ ಗಂಧ - ಇಂತು ಜ್ಞಾನೇಂದ್ರಿಯ ವಿಷಯ ಐದು. ಇನ್ನು ಕರ್ಮೇಂ್ರಯ ವಿಷಯವೆಂತೆಂದಡೆ: ವಚನ, ಗಮನ, ಆದಾನ, ಆನಂದ, ವಿಸರ್ಜನ ಇಂತು ಕರ್ಮೇಂ್ರಯ ವಿಷಯ ಐದು. ಇನ್ನು ವಾಕ್ಕುಗಳಾವುವೆಂದಡೆ: ಪರಾ, ಪಶ್ಯಂತಿ, ಮಧ್ಯಮೆ, ವೈಖರಿ - ಇಂತು ವಾಕ್ಕು ನಾಲ್ಕು. ಸಾತ್ಪಿ, ರಾಜಸ, ತಾಮಸ - ಇಂತು ಗುಣ ಮೂರು. ರಾಜಸಹಂಕಾರ, ವೈಖರಿಯಹಂಕಾರ, ಭೂತಾಯಹಂಕಾರ -ಇಂತು ಅಹಂಕಾರ ಮೂರು. ಪೃಥ್ವಿ, ಅಪ್ಪು, ಅಗ್ನಿ, ವಾಯು, ಆಕಾಶ - ಇಂತು ಭೂತಂಗಳು ಐದು. ಭೂತಕಾರ್ಯ ಇಪ್ಪತ್ತೈದು - ಅವಾವೆಂದಡೆ: ಅಸ್ಥಿ, ಮಾಂಸ, ತ್ವಕ್, ನಾಡಿ, ರೋಮ - ಈ ಐದು ಪೃಥ್ವೀಪಂಚಕ. ಲಾಲಾ, ಮೂತ್ರ, ಸ್ವೇದ, ಶುಕ್ಲ, ಶೋಣಿಕ - ಈ ಐದು ಅಪ್ಪುವಿನ ಪಂಚಕ. ಕ್ಷುಧೆ, ತೃಷೆ, ನಿದ್ರೆ, ಆಲಸ್ಯ, ಸ್ತ್ರೀಸಂಗ - ಈ ಐದು ಅಗ್ನಿಪಂಚಕ. ಪರಿವ, ಪಾರುವ, ಸುಳಿವ, ನಿಲುವ, ಅಗಲುವ - ಈ ಐದು ವಾಯುಪಂಚಕ. ರಾಗ, ದ್ವೇಷ, ಭಯ, ಲಜ್ಜೆ, ಮೋಹ - ಈ ಐದು ಆಕಾಶವಂಚಕ. ಇಂತೀ ಇಪ್ಪತ್ತೈದು ಭೂತಕಾರ್ಯ ಪಂಚೀಕೃತಗಳು. ಇನ್ನು ದಶವಾಯುಗಳು: ಪ್ರಾಣ, ಅಪಾನ, ವ್ಯಾನ, ಉದಾನ, ಸಮಾನ, ನಾಗ, ಕೂರ್ಮ, ಕೃಕರ, ದೇವದತ್ತ, ಧನಂಜಯ - ಈ ಹತ್ತು ವಾಯುಗಳು, ಇನ್ನು ದಶನಾಡಿಗಳು: ಇಡಾ, ಪಿಂಗಳಾ, ಸುಷುಮ್ನಾ, ಗಾಂಧಾರಿ, ಹಸ್ತಿ, ಜಿಹ್ವೆ, ಪುಷ್ಕರ, ಪಯಸ್ವಿನಿ, ಆಲಂಬು, ಲಕುಹ, ಶಂಕಿನಿ - ಇಂತೀ ಹತ್ತು ನಾಡಿಗಳು. ಇಂತು ತತ್ವ ತೊಂಬತ್ತಾರು ಕೂಡಿಕೊಂಡು ಆತ್ಮನು ಭೂಮಧ್ಯದಲ್ಲಿರ್ದು ಅವಸ್ಥೆಬಡುವುದನು ಹೇಳಿಹೆನು. ಅದೆಂತೆಂದಡೆ ಅವಸ್ಥೆಯ ಕ್ರಮ: ಪ್ರೇರಕಾವಸ್ಥೆ ಒಂದು, ಅಧೋವಸ್ಥೆ ಐದು, ಊಧ್ರ್ವಾವಸ್ಥೆ ಐದು, ಮಧ್ಯಾವಸ್ಥೆ ಐದು, ಕೇವಲಾವಸ್ಥೆ ಒಂದು, ಸಕಲಾವಸ್ಥೆ ಒಂದು, ಶುದ್ಧಾವಸ್ಥೆ ಒಂದು, ನಿರ್ಮಲಾವಸ್ಥೆ ಐದು, ಅಂತೂ ಅವಸ್ಥೆ ಇಪ್ಪತ್ತನಾಲ್ಕು, ಅವರಲ್ಲಿ ಪ್ರೇರಕಾವಸ್ಥೆಯೆಂತೆಂದಡೆ: ತತ್ತ್ವಸಮೂಹಂಗಳನು ಕೂಡಿಕೊಂಡು ಇರ್ದಲ್ಲಿ ಆ ಪುರುಷನು ಪಂಚೇಂ್ರಯಂಗಳಲ್ಲಿ ವಿಷಯಂಗಳು ಅತಿ ಚಮತ್ಕಾರದಲ್ಲಿ ಅರಿವವೇಳೆ ಪ್ರೇರಕಾವಸ್ಥೆಯೆಂದು. ಅದಕ್ಕೆ ಪ್ರೇರಿಸುವ ತತ್ತ್ವಂಗಳಾವುವೆಂದಡೆ- ಶಿವತತ್ತ್ವ ಐದು, ವಿದ್ಯಾತತ್ತ್ವ ಏಳು, ಕರಣಂಗಳು ನಾಲ್ಕು, ಭೂತಂಗಳಲ್ಲಿ ಒಂದು, ಇಂದ್ರಿಯಂಗಳಲ್ಲಿ ಒಂದು -ಇಂತೀ ಹದಿನೆಂಟು ತತ್ವಂಗಳಲ್ಲಿ ವಿಷಯಂಗಳನರಿವನು. ಅದು ಹೇಗೆಂದಡೆ - ಶಿವತತ್ತ್ವ ಐದು, ವಿದ್ಯಾತತ್ತ್ವ ಏಳು, ಕರಣಂಗಳು ನಾಲ್ಕು - ಇಂತು ಹದಿನಾರು ತತ್ತ್ವ. ಆಕಾಶಭೂತವೂ ಶ್ರೋತ್ರೇಂದ್ರಿಯವೂ ಕೂಡಿ ಹದಿನೆಂಟು ತತ್ತ್ವದಲ್ಲಿ ಶಬ್ದವನದಲ್ಲಿರಿವ; ವಾಯುಭೂತವೂ ತ್ವಗೇಂದ್ರಿಯವೂ ಕೂಡಿ ಹದಿನೆಂಟು ತತ್ತ್ವದಲ್ಲಿ ಶಬ್ದವನರಿವ; ವಾಯುಭೂತವೂ ತ್ವಗೇಂದ್ರಿಯವೂ ಕೂಡಿ ಹದಿನೆಂಟು ತತ್ತ್ವದಲ್ಲಿ ಸೋಂಕನರಿವ; ತೇಜಭೂತವೂ ನಯನೇಂದ್ರಿಯವೂ ಕೂಡಿ ಹದಿನೆಂಟು ತತ್ತ್ವದಲ್ಲಿ ರೂಪವನರಿವ; ಅಪ್ಪುಭೂತವೂ ಜಿಹ್ವೇಂದ್ರಿಯವೂ ಕೂಡಿ ಹದಿನೆಂಟು ತತ್ತ್ವದಲ್ಲಿ ರಸವನರಿವ; ಪೃಥ್ವಿಭೂತವೂ ಪ್ರಾಣೇಂದ್ರಿಯವೂ ಕೂಡಿ ಹದಿನೆಂಟು ತತ್ತ್ವದಲ್ಲಿ ಗಂಧವನರಿವ. ಇಂತೀ ವಿಷಯಂಗಳನರಿವುದು. ಇದು ಪ್ರೇರಕಾವಸ್ಥೆಯೆಂದೆನಿಸುವದು. ಇನ್ನು ಅಧೋವಸ್ಥೆ ಐದಕ್ಕೆ ವಿವರ: ಪ್ರಥಮದಲ್ಲಿ ಜಾಗ್ರಾವಸ್ಥೆ ಅದಕ್ಕೆ ಪ್ರೇರಿಸುವ ತತ್ತ್ವಂಗಳು ಬಿಟ್ಟಿಹವಾವುವೆಂದಡೆ: ಶಿವತತ್ತ್ವ ಐದು, ಮಾಯಾತತ್ತ್ವ ಒಂದು, ವಿದ್ಯಾತತ್ತ್ವ ಆರು, ಭೂತಂಗಳು ಐದು ಇಂತು ಹದಿನೇಳು ಬಿಟ್ಟಿಹುದು. ಇನ್ನು ಜಾಗ್ರಾವಸ್ಥೆಯಲ್ಲಿಹ ತತ್ತ್ವಗಳೆಷ್ಟೆಂದಡೆ: ಕರಣ ನಾಲ್ಕು, ಬುದ್ಧೀಂದ್ರಿಯ ಐದು, ಕರ್ಮೇಂದ್ರಿಯ ಐದು, ವಿಷಯ ಹತ್ತು, ವಾಯು ಹತ್ತು. ಇಂತು ಮೂವತ್ತನಾಲ್ಕು ತತ್ತ್ವಂಗಳಲ್ಲಿ ಆ ತನು ಕೇಳದೆ ಕೇಳುವ, ಮಾತಾಡದ ಹಾಂಗೆ ಆಲಸ್ಯದಲ್ಲಿ ಮಾತನಾಡುತ್ತಿಹನು, ಇಂತು ಜಾಗ್ರಾವಸ್ಥೆ. ಇನ್ನು ಸ್ವಪ್ನಾವಸ್ಥೆ. ಅದಕ್ಕೆ ಹತ್ತು ತತ್ತ್ವಂಗಳು ಬಿಟ್ಟಿಹವು. ಅವಾವುವೆಂದಡೆ:ಬುದ್ಧೀಂ್ರಯ ಐದು, ಕರ್ಮೇಂದ್ರಿಯ ಐದು. ಲಲಾಟದಲ್ಲಿ ನಿಲುವು ಕಂಠಸ್ಥಾನದಲ್ಲಿ ಇಪ್ಪತ್ತೈದು ತತ್ತ್ವಂಗಳು ಕೂಡಿಕೊಂಡಿಹುದು. ಅದೆಂತೆಂದಡೆ:ಮಾಯೆ ಒಂದು, ವಾಯು ಹತ್ತು, ವಿಷಯ ಹತ್ತು, ಕರಣ ನಾಲ್ಕು ಇಂತು ಇಪ್ಪತ್ತೈದು ತತ್ತ್ವಂಗಳು ಕೂಡಿಕೊಂಡು ಸ್ವಪ್ನಂಗಳ ಕಾಣುತಿಹನು. ಇದು ಸ್ವಪ್ನಾವಸ್ಥೆ. ಇನ್ನು ಸುಷುಪ್ತಾವಸ್ಥೆಗೆ ಬಹಲ್ಲಿ ಕಂಠಸ್ಥಾನದಲ್ಲಿ ನಿಂದ ತತ್ತ್ವಂಗಳಾವಾವವೆಂದಡೆ- ಮಾಯೆ ಒಂದು, ವಾಯು ಒಂಬತ್ತು ವಿಷಯ ಹತ್ತು, ಕರಣ ಮೂರು- ಇಂತು ಇಪ್ಪತ್ತಮೂರು ತತ್ತ್ವ. ಇನ್ನು ಹೃದಯಸ್ಥಾನದಲ್ಲಿ ಕೂಡಿಹ ತತ್ತ್ವ ಆವಾವೆಂದಡೆ: ಪ್ರಾಣವಾಯು ಒಂದು, ಪ್ರಕೃತಿ ಒಂದು, ಚಿತ್ತ ಒಂದು -ಇಂತು ಸುಷುಪ್ತಾವಸ್ಥೆಯಲ್ಲಿ ತತ್ತ್ವ. ಇನ್ನು ತೂರ್ಯಾವಸ್ಥೆಗೆ ಬಹಾಗ ಹೃದಯದಲ್ಲಿ ನಿಂದ ತತ್ತ್ವ ಚಿತ್ತ ಒಂದು. ನಾಬ್ಥಿಸ್ಥಾನದಲ್ಲಿ ತೂರ್ಯಾವಸ್ಥೆಯಲ್ಲಿಹ ತತ್ತ್ವ ಪ್ರಾಣವಾಯು ಒಂದು, ಪ್ರಕೃತಿ ಒಂದು. ಅತೀತಾವಸ್ಥೆಗೆ ಹೋಹಾಗ ನಾಬ್ಥಿಸ್ಥಾನದಲ್ಲಿ ತೂರ್ಯಾವಸ್ಥೆಯಲ್ಲಿ ಪ್ರಾಣವಾಯುವುಳಿದು ಅತೀತಾವಸ್ಥೆಯಲ್ಲಿ ಪ್ರಕೃತಿಗೂಡಿ ಮೂಲಾಧಾರದಲ್ಲಿ ಆಣವಮಲಯುಕ್ತವಾಗಿ ಏನೆಂದರಿಯದೆ ಇಹುದು, ಇಂತಿದು ಅಧೋವಸ್ಥೆ. ಇನ್ನು ಊಧ್ರ್ವಾವಸ್ಥೆ, ಅತೀತದಲ್ಲಿ ಪ್ರಕೃತಿಕಾರ್ಯಂಗಳೆಲ್ಲವನೂ ಬಿಟ್ಟು, ತತ್ತ್ವಂಗಳೊಂದೂ ಇಲ್ಲದೆ, ಅಣವಮಲಸ್ವರೂಪವಾಗಿ ಮೂಲಾಧಾರದಲ್ಲಿ ಬ್ದಿರ್ದ ಆತ್ಮನಿಗೆ ಪರಮೇಶ್ವರನ ಕರುಣದಿಂದ ಕ್ರಿಯಾಶಕ್ತಿ, ಶಕ್ತಿತತ್ತ್ವಮಂ ಪ್ರೇರಿಸುವುದು. ಆ ಶಕ್ತಿ ಕಲೆ, ಕಾಲ, ನಿಯತಿಗಳಂ ಪ್ರೇರಿಸುವುದು. ಆ ವೇಳೆಯಲ್ಲಿ ಸೂಕ್ಷೆ ್ಮಯೆಂಬ ವಾಕ್ಕು ಕೂಡುವುದು. ಇಂತು ಅತೀತದಲ್ಲಿ ಅರುಹಿಸುವ ತತ್ತ್ವಂಗಳು: ಶಕ್ತಿತತ್ತ್ವ, ಕಲೆ, ಕಾಲ, ನಿಯತಿ, ಸೂಕ್ಷೆ ್ಮ ಇಂತು ತತ್ತ್ವಂಗಳು ಐದು. ಇನ್ನು ತೂರ್ಯಾವಸ್ಥೆಗೆ ಬಹಾಗ ಹಿಂದೆ ಹೇಳಿದ ತತ್ತ್ವ ಐದು, ಪಶ್ಯಂತಿಯೆಂಬ ವಾಕ್ಕು, ಪ್ರಾಣವಾಯು ಕೂಡಿ ತತ್ತ್ವ ಏಳು ತೂರ್ಯಾವಸ್ಥೆಯಲ್ಲಿ ಪ್ರೇರಿಸುವುದು: ಹಿಂದೆ ಹೇಳಿದ ತತ್ತ್ವ ಏಳು ಕೂಡಿ, ಹೃದಯಸ್ಥಾನದಲ್ಲಿ ಮಧ್ಯಮೆ, ಚಿತ್ತ - ಎರಡು ಕೂಡುತ್ತಿಹವು. ಆ ವೇಳೆಯಲ್ಲಿ ಜ್ಞಾನಶಕ್ತಿ ಶುದ್ಧವಿದ್ಯಾತತ್ತ್ವಮಂ ಪ್ರೇರಿಸುವುದು. ಆ ಶುದ್ಧವಿದ್ಯಾತತ್ತ್ವ ಆತ್ಮಂಗೆ ಅರಿವನೆಬ್ಬಿಸುವುದು. ಇಚ್ಛಾಶಕ್ತಿ ಈಶ್ವರತತ್ತ್ವಮಂ ಪ್ರೇರಿಸುವುದು; ಈಶ್ವರತತ್ತ್ವ ರಾಗತತ್ತ್ವಮಂ ಪ್ರೇರಿಸುವುದು; ರಾಗತತ್ತ್ವ ಆತ್ಮಂಗೆ ಇಚ್ಛೆಯನೆಬ್ಬಿಸುವುದು. ಆಶಕ್ತಿ ಸಾದಾಖ್ಯತತ್ತ್ವಮಂ ಪ್ರೇರಿಸುವುದು; ಸಾದಾಖ್ಯತತ್ತ್ವ ಪ್ರಕ್ಕೃತಿತ್ತ್ವಮಂ ಪ್ರೇರಿಸುವುದು; ಪರಾಶಕ್ತಿ ಶಿವತತ್ತ್ವಮಂ ಪ್ರೇರಿಸುವುದು; ಶಿವತತ್ತ್ವ ಗುಣತತ್ತ್ವಮಂ ಪ್ರೇರಿಸುವುದು. ಇಂತು ಹದಿನೆಂಟು ತತ್ತ್ವ ಆವಾವವೆಂದಡೆ: ಪಂಚಶಕ್ತಿ ಹೊರಗಾಗಿ ಶಿವತತ್ತ್ವ ಐದು, ವಿದ್ಯಾತತ್ತ್ವ ಐದು, ಪ್ರಾಣವಾಯು ಒಂದು, ಪ್ರಕೃತಿ ಒಂದು, ಗುಣ ಮೂರು, ಚಿತ್ತ ಒಂದು, ಪುರುಷ ಒಂದು. ಇಂತು ತತ್ತ್ವ ಹದಿನೇಳು ಸುಷುಪ್ತಾವಸ್ಥೆಯಲ್ಲಿ ಅರುಹಿಸುವುವು. ಇನ್ನು ಸ್ವಪ್ನಾವಸ್ಥೆಯ ಕಂಠದಲ್ಲಿಹ ತತ್ತ್ವ: ಜ್ಞಾನೇಂದ್ರಿಯ ವಿಷಯ ಹತ್ತು, ಕರ್ಮೇಂದ್ರಿಯ ವಿಷಯ ಹತ್ತು, ಪ್ರಾಣವಾಯು ಉಳಿಯೆ, ವಾಯುಚಿತ್ತ ಉಳಿಯೆ, ತ್ರಿಕರಣ ಅಹಂಕಾರ ಮೂರು, ವೈಖರಿಯ ವಾಕ್ಕು ಒಂದು ಇಂತು ಇಪ್ಪತ್ತನಾಲ್ಕು ತತ್ತ್ವ. ಸುಷುಪ್ತಾವಸ್ಥೆಯಲ್ಲಿ ಹಿಂದೆ ಹೇಳಿದ ತತ್ತ್ವ ಹದಿನೇಳು ಕೂಡಿ ತತ್ತ್ವ ನಲವತ್ತೊಂದು ಸ್ವಪ್ನಾವಸ್ಥೆಯಲ್ಲಿ ಕೂಡಿಹವು. ಆಗ ತನ್ನೊಳಗೆ ಅರುಹಿಸುವ ಪ್ರಕಾರವೆಂತೆಂದಡೆ: ಚಿತ್ತ, ಬುದ್ಧಿ, ಅಹಂಕಾರ, ಮನ, ಹೃದಯ ಈ ಐದು. ಚಿತ್ತವನು ಆಕಾರ ಪ್ರೇರಿಸುವುದು. ಆ ಅಕಾರವನು ಬ್ರಹ್ಮ ಪ್ರೇರಿಸುವನು, ಬುದ್ಧಿಯನು ಉಕಾರ ಪ್ರೇರಿಸುವುದು; ಉಕಾರವನು ವಿಷ್ಣು ಪ್ರೇರಿಸುವನು, ಅಹಂಕಾರವನು ಮಕಾರ ಪ್ರೇರಿಸುವುದು; ಮಕಾರವನು ರುದ್ರ ಪ್ರೇರಿಸುವನು, ಮನವನು ಬಿಂದು ಪ್ರೇರಿಸುವುದು; ಬಿಂದುವನು ಈಶ್ವರ ಪ್ರೇರಿಸುವನು; ಹೃದಯವನು ನಾದ ಪ್ರೇರಿಸುವುದು; ನಾದವನು ಸದಾಶಿವ ಪ್ರೇರಿಸುವನು. ಈ ಹದಿನೈದು ತನ್ನೊಳಗೆ ಸೂಕ್ಷ ್ಮಶರೀರದಲ್ಲಿಹುದು. ...........ಗೀ(?) ಅಷ್ಟತನುವಿನಿಂದ ಸ್ವರ್ಗನರಕವನರಿವನು. ಮುಂದೆ ಜಾಗ್ರಾವಸ್ಥೆಯಲ್ಲಿ ಅರುಹಿಸುವ ತತ್ತ್ವ ಅವಾವವೆಂದಡೆ- ಭೂತ ಐದು, ಉಭಯೇಂದ್ರಿಯ ಹತ್ತು, ಭೂತಕಾರ್ಯ ಇಪ್ಪತ್ತೈದು, ನಾಡಿ ಹತ್ತು, ಅಂತು ತತ್ತ್ವ ನಲವತ್ತೊಂದು. ಅಂತು ಕೂಡಿ ತತ್ತ್ವ ತೊಂಬತ್ತೊಂದು. ಇಂತಿದು ಊಧ್ರ್ವಾವಸ್ಥೆ. ಇನ್ನು ಸಕಲಾವಸ್ಥೆಯೆಂತೆಂದಡೆ: ತೊಂಬತ್ತೊಂದು ತತ್ತ್ವ ಅವರಲ್ಲಿ ಪ್ರೇರಕತತ್ವವೊಂದು ಪ್ರೇರಿಸುವಲ್ಲಿ ಸಕಲಾವಸ್ಥೆ. ಅದು ಶಿವನನೂ ತನ್ನನೂ ಪಾಶಪಂಚಕವನು ಅರಿಯದೆ ಎಲ್ಲ ವಿಷಯಂಗಳನು ಅರಿವುತ್ತಿಹುದು. ಇನ್ನು ಮಧ್ಯಮಾವಸ್ಥೆಯೆಂತೆಂದಡೆ- ಹಿಂದೆ ಕಂಡವನ ಈಗಲೆಂದು ಅರಿಯಹುದೀಗ ಜಾಗ್ರ ಅತೀತ. ಹಿಂದೆ ಕಂಡವನ ಅರಿದ ಹಾಂಗಿಹುದೀಗ ಜಾಗ್ರ ತುರೀಯ. ಹಿಂದೆ ಕಂಡವನ ಮೆಲ್ಲನೆಚ್ಚತ್ತು ಅರಿವುದು ಜಾಗ್ರದ ಸುಷುಪ್ತಿ. ಹಿಂದೆ ಕಂಡವನ ಕಂಡಾಗಲೆ ಅರಿವುದು ಜಾಗ್ರದ ಸ್ವಪ್ನ. ಹಿಂದೆ ಕಂಡವನ ಹೆಸರು, ಇದ್ದ ಸ್ಥಲ, ಅವನ ಕಾಯಕ ಮುಂತಾಗಿ ಚೆನ್ನಾಗಿ ಅರಿವುದು ಜಾಗ್ರದ ಜಾಗ್ರ. ಅದೆಂತೆಂದಡೆ, ಜಾಗ್ರದಲ್ಲಿ ಪುರುಷತತ್ತ್ವದಲ್ಲಿ ಎಲ್ಲ ತತ್ತ್ವಗಳು ಕೂಡಿದ ಕಾರಣಂದ ತಾನೇನ ನೆನೆದಿದ್ದುದನು ಮರೆವುದು ಜಾಗ್ರ ಅತೀತ. ಆ ಪುರುಷತತ್ತ್ವದಲ್ಲಿ ಪ್ರಾಣವಾಯು ಕೂಡಲು ನೆನೆದುದನು ಹೇಳಿಹೆನೆಂದಡೆ ತೋರುವ ಹಾಂಗೆ ಇಹುದು ತೋರದಿಹುದು ಜಾಗ್ರದ ತುರೀಯ. ಆ ಪುರುಷತತ್ತ್ವದಲ್ಲಿ ಪ್ರಾಣವಾಯು ಚಿತ್ತವು ಕೂಡಲು ನೆನೆದುದನು ಮೆಲ್ಲನೆಚ್ಚತ್ತು ಅರಿದು ಹೇಳುವುದು ಜಾಗ್ರದ ಸುಷುಪ್ತಿ, ಆ ಪುರುಷತತ್ತ್ವದಲ್ಲಿ ಕರಣ ನಾಲ್ಕು, ಇಂದ್ರಿಯ ಹತ್ತು, ವಾಯು ಹತ್ತು, ವಿಷಯ ಹತ್ತು ಅಂತೂ ತತ್ತ್ವ ಮೂವತ್ತನಾಲ್ಕು ಕೂಡಲಾಗಿ, ತಾ ನೆನೆದುದನು ಇದ್ದುದನು ಚೆನ್ನಾಗಿ ಅರಿದು ವಿವರದಿಂದ ಹೇಳುವುದು ಇದು ಜಾಗ್ರದ ಜಾಗ್ರ. ಇಂತಿದು ಮಾಧ್ಯಮಾವಸ್ಥೆ. ಇನ್ನು ಕೇವಲಾವಸ್ಥೆಯೆಂತೆಂದಡೆ: ಶುದ್ಧತತ್ತ್ವ ವಿದ್ಯಾತತ್ತ್ವವನೆಲ್ಲವ ಬಿಟ್ಟು ಆಣವಮಲದಲ್ಲಿ ಆಣವಸ್ವರೂಪಾಗಿ ಕಣ್ಗತ್ತಲೆಯಲ್ಲಿ ಏನೂ ಕಾಣದ ಕಣ್ಣಿನ ಹಾಂಗೆ ಇದ್ದುದೀಗ ಕೇವಲಾವಸ್ಥೆ. ಇನ್ನು ಶುದ್ಧಾವಸ್ಥೆಯೆಂತೆಂದಡೆ: ಕರ್ಮಸಮಾನದಲ್ಲಿ ಶಕ್ತಿಪಾತವಾಗಿ,ತ್ರಿಪದಾರ್ಥಜ್ಞಾನವಾಗಿ, ದಿಟವೆಂಬಂತೆ ತೋರುತ್ತಿಹ ದೇಹಾಪ್ರಪಂಚುವನು ಸಟೆಯೆಂದು ಕಸವ ಕಳೆವ ಹಾಂಗೆ ಕಳೆದು, ತತ್ತ್ವಂಗಳೊಳಗೆ ಇದ್ದು ತತ್ತ್ವಂಗಳಿಗೆ ಅನ್ಯವಾಗಿ, ಆ ತತ್ತ್ವಂಗಳನು ಅರಿದ ಸಕಲಾವಸ್ಥೆಯೆಂಬ ಕೇವಲಾವಸ್ಥೆಯೆಂಬ ಈ ಎರಡು ಅವಸ್ಥೆಗಳೂ ತನ್ನನು ಶಿವನನು ಅರಿವುದಕ್ಕೆ ಪ್ರಯೋಜನವಲ್ಲವೆಂದು ಎರಡವಸ್ಥೆಯನೂ ಬಿಟ್ಟು ಸಕಲವನೂ ಹೊದ್ದದೆ ಕೇವಲವನೂ ಹೊದ್ದದೆ ತ್ರಾಸಿನ ಮುಳ್ಳು ನಿಂದ ಹಾಂಗೆ ನಿಂದುದು ಶುದ್ಧಾವಸ್ಥೆ. ಇದು ಶಿವನ ಶರಣರಿಗಲ್ಲದೆ ಇಲ್ಲ. ಇನ್ನು ನಿರ್ಮಲಾವಸ್ಥೆ ಎಂತೆಂದಡೆ- ಶಿವಜ್ಞಾನದಲ್ಲಿ ಬೋಧವನಳಿದು ಜ್ಞೇಯದೊಳು ಕೂಡಿಹ ಜೀವನ್ಮುಕ್ತರಿಗೆ ಪಂಚಾವಸ್ಥೆಗಳು. ಆ ಅವಸ್ಥೆಗಳಲ್ಲಿ ತತ್ತ್ವಗಳಾವಾವೆಂದಡೆ: ಶಿವತತ್ತ್ವ, ಶಕ್ತಿತತ್ತ್ವ, ಸಾದಾಖ್ಯತತ್ತ್ವ, ಈಶ್ವರತತ್ತ್ವ, ಶುದ್ಧ ವಿದ್ಯಾತತ್ತ್ವ ಈ ಐದು ಮೊದಲಾಗಿ ಪರಾ, ಆದಿ, ಇಚ್ಛೆ, ಜ್ಞಾನ, ಕ್ರಿಯೆಯೆಂಬ ಶಕ್ತಿ ಪಂಚಕಗಳು ಉಸುರಾಗಿ ಜಾಗ್ರಾವಸ್ಥೆಯಲ್ಲಿ ಅರಿವುತ್ತಿಹನು. ಕ್ರಿಯಾಶಕ್ತಿ ಶಕ್ತಿತತ್ತ್ವಮಂ ಬಿಟ್ಟು ಉಳಿದ ಶಕ್ತಿ ನಾಲ್ಕು ಒಡಲುಸುರಾಗಿ ಅರಿಯೆ ಸ್ವಪ್ನಾವಸ್ಥೆ. ಜ್ಞಾನಶಕ್ತಿ ಶುದ್ಧವಿದ್ಯಾತತ್ತ್ವಮಂ ಬಿಟ್ಟು ಕಳೆದು ಉಳಿದ ಶಕ್ತಿ ಮೂರರಲ್ಲಿ ಅರಿಯೆ ಸುಷುಪ್ತಾವಸ್ಥೆ. ಇಚ್ಛಾಶಕ್ತಿ ಈಶ್ವರತತ್ತ್ವಮಂ ಬಿಟ್ಟು ಕಳೆದು ಉಳಿದ ಶಕ್ತಿ ಎರಡರಲ್ಲಿ ಅರಿವುದು ತೂರ್ಯಾವಸ್ಥೆ. ಆಶಕ್ತಿ ಸಾದಾಖ್ಯತತ್ತ್ವವೂ ಬಿಟ್ಟು ಕಳೆದು ಉಳಿದ ಪರಾಶಕ್ತಿ ಒಂದು ಶಿವತತ್ತ್ವ ಒಂದರಲ್ಲಿ ಅರಿಯೆ ನಿರ್ಮಲದ ಅತೀತಾವಸ್ಥೆ. ಇನ್ನು ಈ ಶಕ್ತಿ ಶಿವತತ್ತ್ವಂಗಳೆ ಒಡಲುಸುರಾಗಿ ಇದ್ದಲ್ಲಿ ಶಿವನಲ್ಲದೆ ಮತ್ತೊಂದು ಏನೂ ತೋರದು. ಅಂಥ ಜೀವನ್ಮುಕ್ತರು ನಿರ್ಮಲಜಾಗ್ರದಲ್ಲಿ ಎಂತು ಅರಿವುತ್ತಿಪ್ಪರೆಂದಡೆ ಆ ಪರಮಾವಸ್ಥೆಯನೂ ಅನುಭವದಲ್ಲಿ ಅರಿವುದು, ಮಲಪಂಚಕಗಳನು ಅರುಹಿಸುವ ಸದಮಲ ಶಿವಜ್ಞಾನ ಪರೆ ಮೊದಲಾದ ಪೂರ್ಣ ಬೋಧದಲ್ಲಿ ಕೂಡಿ ತಾನು ಇಲ್ಲದಿರುವಂಧು ಏನೂ ತೋರದ ಪೂರ್ಣ ಬೋಧವಾಗಿ ನಿಂದುದು ನಿರ್ಮಲಜಾಗ್ರ. ಇನ್ನು ಪರಾಶಕ್ತಿಯನೂ ಶಿವತತ್ತ್ವವನೂ ಮೀರಿ, ಪರದಲಿ ಬೆರೆದು, ಅದ್ವೆ ೈತವೂ ಅಲ್ಲದೆ, ದ್ವೆ ೈತವೂ ಅಲ್ಲದೆ, ದ್ವೆ ೈತಾದ್ವೆ ೈತವೂ ಅಲ್ಲದೆ ಇನತೇಜದಲ್ಲಿ ಕಣ್ಣು ತೇಜ ಕೂಡಿದ ಹಾಂಗೆ ಆಣವದ ಅಣುವಿನ ಹಾಂಗೆ ತಾನು ಇಲ್ಲದೆ ಇಹನು. ಇದು ಶಿವಾದ್ವೆ ೈತ. ಇಂತಲ್ಲದೆ ಆತ್ಮ ಆತ್ಮ ಕೆಟ್ಟಡೆ, ಆತ್ಮವರ್ಗ ಮುಕ್ತಿಸುಖವಿಲ್ಲ, ಅಳಿದ ಠಾವಿನಲ್ಲಿ ಹುಟ್ಟುವುದಾಗಿ, ಶಿವ ತಾನೆ ಆತ್ಮನಾಗಿ ಹುಟ್ಟುವನಹುದು: ಶಿವನಲ್ಲಿ ಹುಟ್ಟಿ ಮಲ ಉಳ್ಳದಹುಲ್ಲ. ಶಿವ ತಾನೆ ಹುಟ್ಟಿಸಿ ನರಕ - ಸ್ವರ್ಗದ ಮಾನವನಹನು, ಪಕ್ಷಪ್ಕಾಯಹನು, ನಿಃಕರುಣಿಯಹನು, ವಿಕಾರಿಯಹನು. ಶಿವನ್ಲ ಕೂಡದೆ ಬೇರಾಗಿ ಇಹನೆಂದಡೆ, ಮುಕ್ತಿಯೆಂಬ ಮಾತು ಇಲ್ಲವಹುದು. ಪಂಚಕೃತ್ಯವ ಮಾಡಲು ಕಾರಣವಿಲ್ಲ ಒಂದಾಗೆ! ಎರಡಾಗದೆ ಭೇದಾಭೇದವಾಗಿಹನೆಂದಡೆ ಶಿವಭಕ್ತಿಯನೂ ಶಿವಕ್ರಿಯೆಗಳನೂ ಮಾಡಿ ಶಿವನ ಕೂಡಿಹನೆಂದೆನ್ನಬೇಡ! ಮುನ್ನವೆ ಒಂದಾಗಿ ಇದ್ದನಾಗಿ, ಈ ಭೇದವ ತಿಳಿಯಬಲ್ಲಡೆ ಆತನೆ ಶರಣ ಕಾಣಾ, ಕಪಿಲಸಿದ್ಧಮಲ್ಲಿಕಾರ್ಜುನಾ
--------------
ಸಿದ್ಧರಾಮೇಶ್ವರ
ಉದಕ ಹಲವು ತೆರದಲ್ಲಿ ಏರಿಯ ಕೂಡಿ ದ್ವಾರವೊಂದರಲ್ಲಿಯೈದುವಂತೆ, ನಾನಾ ಭವಂಗಳಿಂದ ಇಷ್ಟದ ಗೊತ್ತಿನಲ್ಲಿ ನಿಂದು ನಿಶ್ಚಯವನರಿದು, ಮತ್ತಾ ಗುಣ ಬಚ್ಚಬಯಲು ಏಣಾಂಕಧರ ಸೋಮೇಶ್ವರಲಿಂಗದಲ್ಲಿ
--------------
ಬಿಬ್ಬಿ ಬಾಚಯ್ಯ
ಗೆಲ್ಲ ಸೋಲಬಲ್ಲವರಿಗೇಕೆ ? ಅದು ಬೆಳ್ಳರ ಗುಣ. ಪಥವೆಲ್ಲರಲ್ಲಿ ನಿಹಿತನಾಗಿ, ಅತಿಶಯದ ವಿಷಯದಲ್ಲಿ ಗತನಾಗದೆ, ಸರ್ವವನರಿತು, ಗತಮಯಕ್ಕೆ ಅತೀತನಾಗು, ಸಗರದ ಬೊಮ್ಮನೊಡೆಯ ತನುಮನ ಸಂಗಮೇಶ್ವರಾ.
--------------
ಸಗರದ ಬೊಮ್ಮಣ್ಣ
ಕಂಚು ತಾಮ್ರ ಹಿತ್ತಾಳಿ ಈ ಮೂರು ಸೀಸದಂಗನ ಭೇದ. ಮನ ಬುದ್ಧಿ ಚಿತ್ತ ಈ ಮೂರು ಅಹಂಕಾರದಂಗದೊಡಲು. ಅರಿದುದ ಮರೆದುದ ಮತ್ತರಿದೆನೆಂಬುದು ಆ ಗುಣ ಕ್ಷಣಿಕಾತ್ಮನ ಒಡಲು. ಇಂತಿವನರಿದು ಬಿಡಲು, ಹಿರಿಯ ಹಸುಬೆಯೊಳಗಡಗಿದ ನಾನಾ ವ್ಯವಹಾರದೊಡಲು. ಇಂತೀ ಗುಣವಡಗಿ, ಊಧ್ರ್ವರೇತೋಮೂರ್ತಿ ಶ್ವೇತಸ್ವಯಂಭು ಕಪಿಲೇಶ್ವರಲಿಂಗವ ಕೂಡಬಲ್ಲಡೆ.
--------------
ಮಹಾಲಿಂಗ ಶಶಿಮೌಳಿ ಸದಾಶಿವ
ಮಾಡದವನ ಹೆಸರು ಮಣ್ಣಿನಲ್ಲಿ; ಮಣ್ಣು ಮಾಡಿದವನ ಹೆಸರು ಮೂಲೋಕದಲ್ಲಿ. ಮಾಡಿದನೆಂಬುದು ಮನದ ಗುಣ; ಮಾಡಿದವನವನೆಂಬುದು, ಮಹಾದೇವ ಕಪಿಲಸಿದ್ಧಮಲ್ಲಿಕಾರ್ಜುನನ ಕೂಡುವ ಗುಣ, ಮಡಿವಾಳಯ್ಯ ಸಾಕ್ಷಿಯಾಗಿ.
--------------
ಸಿದ್ಧರಾಮೇಶ್ವರ
ಅರ್ಥ ಪ್ರಾಣ ಅಭಿಮಾನದಲ್ಲಿ ವಂಚನೆುಲ್ಲದಿಹುದೆ ಭಕ್ತಿ, ಹೆಚ್ಚು ಕುಂದಿಲ್ಲದಿಹುದೆ ಸಮಯಾಚಾರ, ಜಂಗಮವೆ ಲಿಂಗವೆಂಬುದಕ್ಕೆ ಏನು ಗುಣ ಮನದ ಲಂಪಟತನ ಹಿಂಗದಾಗಿ ಒಡೆಯರ ಬರವಿಂಗೆ ಕುನ್ನಿ ಬಾಲವ ಬಡಿದಡೆ ವೆಚ್ಚವೇನು ಹತ್ತುವುದು ಕೂಡಲಸಂಗಮದೇವಾ 217
--------------
ಬಸವಣ್ಣ
ಸಂಚಿತವನರಿವುದು ಕರ್ಮಯೋಗ. ಆಗಾಮಿಯನರಿವುದು ಆತ್ಮಯೋಗ. ಪ್ರಾರಬ್ಧವನರಿವುದು ಪರಮಯೋಗ. ಇಂತೀ ತ್ರಿವಿಧಯೋಗಂಗಳಲ್ಲಿ ತಿಳಿದು ಯೋಗ ನಿಯೋಗವೆಂಬುದ ಕಂಡು ತನ್ನಯ ಆತ್ಮನ ಸ್ಪರ್ಶಗಾಢಂಗಳ ಘಟದಲ್ಲಿ ಸ್ವಸ್ಥಾನದಲ್ಲಿಪ್ಪುದ, ಇರದೆಂಬುದ ಲಕ್ಷಿಸಿಕೊಂಡು ಸರ್ವವ್ಯವಧಾನಂಗಳಲ್ಲಿ ಸಾವಧಾನವನರಿವುದು ಪ್ರಾಣಲಿಂಗಿಯ ಕೂಟ. ಈ ಗುಣ ಸಂಗನಬಸವಣ್ಣನ ಸಂಯೋಗ. ಬ್ರಹ್ಮೇಶ್ವರಲಿಂಗದ ಕೂಟ.
--------------
ಬಾಹೂರ ಬೊಮ್ಮಣ್ಣ
ತನ್ನಲೊಂದು ಗುಣ ತೋರಲಿಕ್ಕಾಗಿ ಆ ಗುಣವ ಇದಿರು ಕಂಡು ನುಡಿದರೆಂದು ನೋಯಲೇತಕ್ಕೆ? ಆ ನುಡಿ ತನಗೆ ನಿರುತ್ತರವೆಂಬುದನರಿದು ಘಾಯ ಬಾಹುಗಳಲ್ಲಿ ಶ್ರೋಣಿತ ಹೊರೆಯಲ್ಲಿ ನಿಂದಿರಲಿಕ್ಕಾಗಿ ಘಾಳಿಸಿ ಹೊರವಡಿಸಿದಾತ ಹಗೆತನನೆಂಬುದರಿತು ತನ್ನಲುಂಟಾದವಗುಣ ತನಗೆ ತೋರದಿರೆ ದೃಷ್ಟವ ಕಂಡು ಹೇಳಿದ ಮತ್ತೆ ಮಿಥ್ಯಗುಣವಿಲ್ಲದೆ ಆ ಕಷ್ಟಗುಣವ ಬಿಡಬೇಕು. ಈ ಗುಣ ಅಂಗವಿದ್ದಲ್ಲಿ ನಿಂದೆಯ ದುರ್ಗುಣ ಸೋಂಕದಿಹವೆ? ಅರಿಯದೆ ಸೋಂಕಿದಲ್ಲಿ ಅರಿದ ಮತ್ತೆ ತೊರೆಯಬೇಕು. ತೋರಿದಡೆ ಕೂಗಿನ ದನಿಗೆ ಹೊರಗು ಮಹಾಮಹಿಮ ಮಾರೇಶ್ವರಾ.
--------------
ಕೂಗಿನ ಮಾರಯ್ಯ
ಭಕ್ತಂಗೆ ಮೂರು ಗುಣ, ಮಾಹೇಶ್ವರಂಗೆ ಆರು ಗುಣ, ಪ್ರಸಾದಿಗೆ ಎಂಟು ಗುಣ, ಪ್ರಾಣಲಿಂಗಿಗೆ ಹತ್ತು ಗುಣ, ಶರಣಂಗೆ ಹದಿನಾರು ಗುಣ, ಐಕ್ಯಂಗೆ ಐವತ್ತೆರಡು (ಗುಣ). ಸರನಾದು ಭೇದ ನಿಂದಲ್ಲಿ ಒಂದೆ ಗುಣ ಸಂದಿತ್ತು. ಇದು ಕ್ರಿಯಾಸ್ಥಲ ನಿರ್ವಾಹ. ಸಂಗನ ಬಸವಣ್ಣನ ಆದಿ, ಚನ್ನಬಸವಣ್ಣನ ಅನಾದಿ ಶರಣ ಸಂತತಿಯ ಸಂಬಂಧ ಮಾರ್ಗ. ಶಂಭುವಿನಿಂದಿತ್ತ ಸ್ವಯಂಭುವಿನಿಂದತ್ತ ಅತಿಬಳ ನೋಡಾ, ಮಾತುಳಂಗ ಮಧುಕೇಶ್ವರನು. || 64 ||
--------------
ದಾಸೋಹದ ಸಂಗಣ್ಣ
ಕರ್ಪುರದ ಹಣತೆಯಲ್ಲಿ ಬತ್ತಿಯ ಹಾಕಿ ಉರುಹಬಹುದೆ? ಕಿಚ್ಚಿನ ಮಧ್ಯದಲ್ಲಿ ನಿಂದು ಕೆಟ್ಟಿತ್ತೆಂದು ಹುಲ್ಲ ಸೊಪ್ಪ ಹಾಕಿ ಹೊತ್ತಿಸಬಹುದೆ? ಅಲಗು ಕ್ರೂರವಾಯಿತ್ತೆಂದು ತನ್ನೊಡಲನಿರಿದು ಅಲಗಿನ ಕ್ರೂರ ಸುಲಲಿತವೆನ್ನಬಹುದೆ? ಆ ಗುಣ ಅಲ್ಲಲ್ಲಿಗೆ ದೃಷ್ಟ. ಇದು ನಿಶ್ಚಯ ನಿಜ ಲಿಂಗಾಂಗಿಗೆ ಅರಿವಿನ ಭೇದ. ಕಾಲಕರ್ಮವಿರಹಿತ ತ್ರಿಪುರಾಂತಕಲಿಂಗದವನ ತೆರ.
--------------
ಶಂಕರದಾಸಿಮಯ್ಯ
ವೇದನೆಯಿಂದ ವಸ್ತುವ ವೇದಿಸಿ ಕಾಣಬೇಕೆಂಬುದು ಅದೇನು ಹೇಳಾ. ಸರ್ವೇಂದ್ರಿಯಂಗಳ ಸಂಚವ ಬಿಟ್ಟು, ಏಕೇಂದ್ರಿಯದಲ್ಲಿ ವಸ್ತುವ ಆಚರಿಸಬೇಕೆಂಬುದು ಅದೇನು ಹೇಳಾ. ಅಲ್ಲ ಅಹುದು, ಉಂಟು ಇಲ್ಲ ಎಂಬುದು ಗೆಲ್ಲ ಸೋಲಕ್ಕೆ ಹೋರುವುದು ಅದೇನು ಹೇಳಾ. ಅದು ಪಂಚಲೋಹದ ಸಂಚದಂತೆ ಹಿಂಚು ಮುಂಚಿನ ಭೇದ. ಅರಿದೆ ಮರೆದೆನೆಂಬುದು ಪರಿಭ್ರಮಣದ ಭೇದ. ಅರಿಯಲಿಲ್ಲ ಮರೆಯಲಿಲ್ಲ ಎಂಬುದು ಅದು ಪರತತ್ವದ ಭೇದ. ಇಂತೀ ಗುಣ ಭಾವಂಗಳ ಲಕ್ಷಿಸಿ, ದೃಷ್ಟಿ ಉಂಟೆಂದಲ್ಲಿ ಆತ್ಮ, ದೃಷ್ಟ ನಷ್ಟವಾಯಿತ್ತೆಂಬಲ್ಲಿಯೆ ಪರಮ. ಉಭಯದ ತೊಟ್ಟು ಬಿಟ್ಟಲ್ಲಿ, ನಿಜ ನಿಶ್ಚಯ ಅದೆಂತು ತಾನಂತೆ, ಕಾಮಧೂಮ ಧೂಳೇಶ್ವರನು.
--------------
ಮಾದಾರ ಧೂಳಯ್ಯ
ಉರಿದು ಬೇವದು ಉರಿಯೋ, ಮರನೋ ? ಹರಿದು ಕೊರೆವದು ನೆಲನೋ, ನೀರೋ ? ನೆಲ ನೀರಿನಂತಾದುದು ಅಂಗಲಿಂಗಸಂಬಂಧ. ಉರಿ ಮರನಂತಾದುದು ಪ್ರಾಣಲಿಂಗಸಂಬಂಧ. ಈ ನಾಲ್ಕರ ಗುಣ ಉಭಯಕೂಟವಾದುದು ಶರಣಸ್ಥಲ. ಆ ಸ್ಥಲ ಸುರಧನುವಿನ ಕೆಲವಳಿಯಂತೆ, ಮರೀಚಿಕಾಜಲವಳಿಯಂತೆ, ಮಂಜಿನ ರಂಜನೆಯ ಜಂಝಾಮಾರುತನಂತೆ, ಆ ಸಂಗ ನಿಸ್ಸಂಗ ಐಕ್ಯಸ್ಥಲ, ನಿಃಕಳಂಕ ಮಲ್ಲಿಕಾರ್ಜುನ ರೂಪಳಿದು ನೀರಾದಂತೆ ಅಂಗಲಿಂಗಸಂಬಂಧಿ ಏಣಾಂಕಧರ ಸೋಮೇಶ್ವರಲಿಂಗದಲ್ಲಿ.
--------------
ಬಿಬ್ಬಿ ಬಾಚಯ್ಯ
ಶಿವಭಕ್ತಿಯುಳ್ಳವಂಗೆ; ಕಾಮ ಬೇಡ, ಕ್ರೋಧ ಬೇಡ, ಲೋಭ ಬೇಡ; ಮೋಹ ಬೇಡ, ಮದ ಬೇಡ, ಮತ್ಸರ ಬೇಡ. ಶಿವಭಕ್ತಿಯುಳ್ಳವಂಗೆ; ಕಾಮ ಬೇಕು, ಕ್ರೋಧ ಬೇಕು, ಲೋಭ ಬೇಕು, ಮೋಹ ಬೇಕು, ಮದ ಬೇಕು, ಮತ್ಸರ ಬೇಕು. ಬೇಕೆಂಬುದಕ್ಕಾವ ಗುಣ ? ಕಾಮ ಬೇಕು ಲಿಂಗದಲ್ಲಿ, ಕ್ರೋಧ ಬೇಕು ಕರಣಂಗಳಲ್ಲಿ, ಲೋಭ ಬೇಕು ಪಾದೋದಕ ಪ್ರಸಾದದಲ್ಲಿ, ಮೋಹ ಬೇಕು ಗುರುಲಿಂಗ ಜಂಗಮದಲ್ಲಿ, ಮದ ಬೇಕು ಶಿವಚಾರದಿಂದ ಘನವಿಲ್ಲವೆಂದು, ಮತ್ಸರ ಬೇಕು ಹೊನ್ನು ಹೆಣ್ಣು ಮಣ್ಣಿನಲ್ಲಿ_ಇಂತೀ ಷಡ್ಗುಣವಿರಬೇಕು. ಬೇಡವೆಂಬುದಕ್ಕಾವುದು ಗುಣ ? ಕಾಮ ಬೇಡ ಪರಸ್ತ್ರೀಯರಲ್ಲಿ, ಕ್ರೋಧ ಬೇಡ ಗುರುವಿನಲ್ಲಿ, ಲೋಭ ಬೇಡ ತನು ಮನ ಧನದಲ್ಲಿ, ಮೋಹ ಬೇಡ ಸಂಸಾರದಲ್ಲಿ, ಮದ ಬೇಡ ಶಿವಭಕ್ತರಲ್ಲಿ, ಮತ್ಸರ ಬೇಡ ಸಕಲಪ್ರಾಣಿಗಳಲ್ಲಿ._ ಇಂತೀ ಷಡ್ಗುಣವನರಿದು ಮೆರೆಯಬಲ್ಲಡೆ ಆತನೇ ಸಹಜ ಸದ್ಭಕ್ತ ಕಾಣಾ ಕೂಡಲಚೆನ್ನಸಂಗಮದೇವಾ
--------------
ಚನ್ನಬಸವಣ್ಣ
ಇನ್ನಷ್ಟು ... -->