ಅಥವಾ

ಒಟ್ಟು 18 ಕಡೆಗಳಲ್ಲಿ , 4 ವಚನಕಾರರು , 10 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಪರಿಮಿತಕೆ ನಡೆತಂದು ಪರುಷದ ಸಿಂಹಾಸನದ ಮೇಲೆ ಪರಮಗುರು ಮೂರ್ತಿಗೊಂಡಿರಲು, ಪರಮಾನಂದಜಲದಿಂದ ಪಾದಾರ್ಚನೆಯಂ ಮಾಡಿ, ದಿವ್ಯಸುಗಂಧಮಂ ಲೇಪಿಸಿ, ಅಕ್ಷಯವೆಂಬ ಅಕ್ಷತೆಯನಿಟ್ಟು, ಹೃದಯಕಮಲದ ಪುಷ್ಪದಿಂದ ಪೂಜೆಯ ಮಾಡಿ, ಸುಜ್ಞಾನವಾಸನೆಯೆಂಬ ಧೂಪಮಂ ಬೀಸಿ, ಭಕ್ತಿಸಾರಾಯವೆಂಬ ನೈವೇದ್ಯಮಂ ಸಮರ್ಪಿಸಿ, ಪರಮಹರುಷವನೆ ಹಸ್ತಮಜ್ಜನಕ್ಕೆರೆದು, ತ್ರಿಕರಣಶುದ್ಧವೆಂಬ ತಾಂಬೂಲಮಂ ಕೊಟ್ಟು, ಸಮರಸಸಂಗದಿಂದ ಕೂಡಲಸಂಗಮದೇವರ ಶರಣ ಪ್ರಭುದೇವರ ಕರುಣವೆನಗಾಯಿತ್ತು.
--------------
ಬಸವಣ್ಣ
ಮಹಾಮೇರುವೆಂಬ ಪಟ್ಟಣದರಸಂಗೆ ಮೂರು ಪ್ರಧಾನಿಗಳು, ಆರು ಮಂದಿ ವಜೀರರು, ಮೂವತ್ತಾರು ಮಂದಿ ಸರದಾರರು, ಐವತ್ತೆರಡು ಮಂದಿ ಮಹಾಲದಾರರು ಕೂಡಿ ಕತ್ತಲ ಕಾಳಂಧವೆಂಬ ದೇಶವನು ಕಾಳಗವ ಮಾಡಿ ತಕ್ಕೊಂಬುವುದ ಕಂಡೆನಯ್ಯ. ಅದು ಹೇಗೆಂದಡೆ: ಹತ್ತುಲಕ್ಷ ರಾವುತರ ಹಿಡಿದು, ಎಂಟು ಸಾವಿರ ಕುದುರೆಗಳ ಹಿಡಿದು, ಅರವತ್ತು ಕೋಟಿ ಕಾಲಮಂದಿಯ ಸಂದಿಸಂದಿನಲ್ಲಿ ನಿಲಿಸಿ, ಸಪ್ತೇಳುಸಾಗರವ ದಾಂಟಿ, ಕತ್ತಲಕಾಳಂಧವೆಂಬ ದೇಶವನು, ಕೈಸೆರೆಯ ಮಾಡಿಕೊಂಡು, ಐದು ಠಾಣ್ಯವ ಬಲಿದು, ಕಡೆಯ ಠಾಣ್ಯದ ಮುಂದೆ ಚಾವಡಿಯ ರಚಿಸುವುದ ಕಂಡೆನಯ್ಯ. ಅದು ಹೇಗೆಂದಡೆ: ಅದಕೆ ಕಂಬ ಒಂದು, ತೊಲೆ ಮೂರು, ಆರು ಜಂತಿಗಳು, ಮೂವತ್ತಾರು ನೆಲೆಗಳ ಹೂಡಿ. ಒಂಬತ್ತು ಬಾಗಿಲಲ್ಲಿ ನವ ಬೊಂಬೆಗಳ ನಿಲಿಸಿ, ಅವಕ್ಕೆ ನವರತ್ನವ ಕೆತ್ತಿಸಿ, ಐದು ತೊಂಡಲಂಗಳ ಕಟ್ಟಿ, ಹವಳ ನೀಲ ರತ್ನ ಧವಳ ಮುತ್ತು ಮಾಣಿಕ್ಯದ ಗದ್ದುಗೆಯ ಮೇಲೆ ಆ ಅರಸನ ಮೂರ್ತಂಗೊಳಿಸಿ, ಸಪ್ತದ್ವೀಪಂಗಳಂ ರಚಿಸಿ, ಸೋಮವೀದಿ ಸೂರ್ಯವೀದಿಯ ಶೃಂಗಾರವ ಮಾಡಿ, ಆ ಅರಸಿಂಗೆ ಒಡ್ಡೋಲಗವಂ ಮಾಡುವುದ ಕಂಡೆನಯ್ಯ. ಅದು ಹೇಗೆಂದಡೆ: ಪಾತಾಳಲೋಕವೆಂಬ ಠಾಣ್ಯದಲ್ಲಿ ತಾಳ, ಕಂಸಾಳ, ಘಂಟೆ, ಜಾಗಟೆ ಮೊದಲಾದ ಶಬ್ದಂಗಳು, ಮತ್ರ್ಯಲೋಕವೆಂಬ ಠಾಣ್ಯದಲ್ಲಿ ಕಿನ್ನರವೇಣು ತಂಬೂರವೇಣು ಕೈಲಾಸವೇಣುಗಳು ಮೊದಲಾದ ಶಬ್ದಗಳು, ಸ್ವರ್ಗಲೋಕವೆಂಬ ಠಾಣ್ಯದಲ್ಲಿ ಭೇರಿ ಡಮರು ತುಡುಮೆ ಡಿಂಡಿಮ ಮೊದಲಾದ ಶಬ್ದಂಗಳು, ತತ್ಪುರುಷವೆಂಬ ಲೋಕದಲ್ಲಿ, ಕೊಳಲು ನಾಗಸ್ವರ ಶಂಖ ಸನಾಯ ಬುರುಗು ನಪಿರಿ ಹೆಗ್ಗಾಳೆ ಚಿನಿಗಾಳೆ ಚಂದ್ರಗಾಳೆ ಮೊದಲಾದ ಶಬ್ದಂಗಳು, ಈಶಾನ್ಯಲೋಕವೆಂಬ ಠಾಣ್ಯದಲ್ಲಿ ಗೀತಪ್ರಬಂಧ ರಾಗಭೇದ ಮೊದಲಾದ ಶಬ್ದಂಗಳು, ಇಂತಿವು ಆ ಅರಸಿಂಗೆ ಒಡ್ಡೋಲಗವ ಮಾಡುವುದ ಕಂಡೆನಯ್ಯ. ಬ್ರಹ್ಮಂಗೆ ತಾಳ, ವಿಷ್ಣುವಿಂಗೆ ವೇಣು, ರುದ್ರಂಗೆ ಮೃದಂಗ, ಈಶ್ವರಂಗೆ ಉಪಾಂಗ, ಸದಾಶಿವಂಗೆ ಗಾಯನ- ಇಂತೀ ಐವರು ಆ ಅರಸಿಂಗೆ ಗಂಧರ್ವರಾಗಿರ್ಪರು ನೋಡಾ. ಆದಿಶಕ್ತಿ ಮಂತ್ರಶಕ್ತಿ ಕ್ರಿಯಾಶಕ್ತಿ ಇಚ್ಫಾಶಕ್ತಿ ಜ್ಞಾನಶಕ್ತಿ ಇಂತೈವರು ನಾಂಟ್ಯವನಾಡುತಿರ್ಪರು ನೋಡಾ. ಒಬ್ಬ ಸತಿಯಳು ಆ ಅರಸಿಂಗೆ ಸಜ್ಜನವೆಂಬ ಮಜ್ಜನವ ನೀಡಿ, ಅಂತರಂಗದ ಬೆಳಗಿನ ಮಹಾಚಿದ್ವಿಭೂತಿಯಂ ಧರಿಸಿ, ನಿರ್ಮಲವೆಂಬ ಗಂಧವನೊರೆದು, ಸುಜ್ಞಾನವೆಂಬ ಅಕ್ಷತೆಯನಿಟ್ಟು, ನಿರ್ಭಾವವೆಂಬ ಪತ್ರಿಯನೇರಿಸಿ, ನಿದ್ರ್ವಂದ್ವವೆಂಬ ಧೂಪವ ತೋರಿ, ಭಕ್ತನೆಂಬ ಅಡ್ಡಣಿಗೆಯ ಮೇಲೆ, ಮಹೇಶ್ವರನೆಂಬ ಹರಿವಾಣವನಿಕ್ಕಿ, ಮಹಾಪ್ರಸಾದವ ನೆಲೆಯಂಗೊಂಡು, ಪ್ರಾಣಲಿಂಗಿಯೆಂಬ ತುಪ್ಪವನೆರೆದು, ಶರಣನೆಂಬ ಸಕ್ಕರೆಯ ತಳೆದು, ಆ ಅರಸಿಂಗೆ ನೈವೇದ್ಯವ ಮಾಡುತಿರ್ಪಳು ನೋಡಾ. ನವರತ್ನದ ಹರಿವಾಣದೊಳಗೆ ಪಂಚಾರ್ತಿಯ ಮೇಲೆ ಏಕಾರ್ತಿಯನಿಕ್ಕಿ ಪಂಚದೀಪಂಗಳ ರಚಿಸಿ, ಆ ಅರಸಿಂಗೆ ಓಂ ನಮೋ ಓಂ ನಮೋ ಎಂದು ಬೆಳಗುತಿರ್ಪಳು ನೋಡಾ ಝೇಂಕಾರ ನಿಜಲಿಂಗಪ್ರಭುವೆ.
--------------
ಜಕ್ಕಣಯ್ಯ
ಎಲಾ, ಶಿವಪೂಜೆಯ ಮಾಡುವ ಶಿವಪೂಜಕರು ನೀವು ಕೇಳಿರಯ್ಯಾ ; ನಿಮ್ಮ ಶಿವಪೂಜೆ[ಯ]ವಿಧ ಯಾವುದೆಲಾ ? ಜಲದಿಂದ ಮಜ್ಜನವ ನೀಡುವಿರಿ ; ಜಲ ಮೀನಿನೆಂಜಲು. ಅಡವಿಯಂ ತಿರುಗಿ, ಪುಷ್ಪವಂ ತಂದು, ಶಿವಗಂ ಅರ್ಪಿ[ಸುವಿರಿ]; ಪುಷ್ಪ ಭೃಂಗದೆಂಜಲು. ಪಂಚಾಭಿಷೇಕ[ವ]ಮಾಡುವಿರಿ; ಕ್ಷೀರ ಕರುವಿನೆಂಜಲು. ಮಧು[ವ] ಅಭಿಷೇಕವ ಮಾಡುವಿರಿ; [ಮಧು] ಮಧು[ಕ]ರಮಯಂ. [ಇಂ]ತೀ ನೈವೇದ್ಯವಂ ಮಾಡುವೆಯಲ್ಲದೆ ಶಿವಪೂಜೆಯ ವಿಧವ ಬಲ್ಲೆ ಏನಯ್ಯಾ ? ಅದು ಎಂತೆಂದಡೆ: ಮಾನಸ ಪೂ[ಜಕ]ಸ್ಯ ಸರ್ವಪಾಪಃ [ಪರಿಹರತಿ] | ಸಾ[ಮೀ]ಪ್ಯ[ಂ] ಸದ್ಗು[ರೋಃ] ಪ್ರಾ[ಪ್ಯ] ಪುನರ್ಭವ ವಿನಶ್ಯತಿ || ಇಂತೀ ಆಗಮ ಗ್ರಂಥವುಂಟಲ್ಲಾ ಇದನ್ನರಿತು ಮಾನಸವೆಂಬೋ ಕಲ್ಲಿನ ಮೇಲೆ ಮದಮಚ್ಚರವೆಂಬೋ ಗಂಧ ಕೊರಡಿನಿಂದ ತೇಯ್ದು, ಸತ್ಯವೆಂಬೋ ಗಂಧವಂ ಹಚ್ಚಿ, ನಿತ್ಯತ್ವ ಎಂಬೋ ಅಕ್ಷತೆಯನಿಟ್ಟು, ಗುರುಕೀಲೆಂಬೋ ಒರಳಿನಲ್ಲಿ ಮದಮಚ್ಚರವೆಂಬೋ ತಂಡಿಲಂ ಕುಟ್ಟಿ, ಬುದ್ಧಿಯೆಂಬೋ ಮೊರದಿಂದ ಝಾಡಿಸಿ ಕೇರಿ, ನಿಜವೆಂಬೋ ಅನ್ನವಂ ಮಾಡಿ, ನಿರ್ಮಳ ಚಿತ್ತವೆಂಬೋ ತುಪ್ಪವಂ ನೀಡಿ, ನಿರುಪಮ ಅವಸ್ಥೆಗಳಿಂದ ನೈವೇದ್ಯವಂ ಕೊಟ್ಟು, ಕಾಮಕ್ರೋಧವೆಂಬೋ ಬತ್ತಿಯ ಹೊಸೆದು, ಗುರುಪ್ರಣುತವೆಂಬೋ ಪಣತಿಯೊಳಗೆ ನಿರ್ಮಳವೆಂಬೋ ತೈಲವಂ ಎರೆದು ಜ್ಯೋತಿಯ ಮುಟ್ಟಿಸಿ, ನಿರ್ಮಳ ಲಿಂಗಕ್ಕಂ ಅರ್ಪಿಸಿ ಮೋಕ್ಷವ ಕಂಡಡೆ ಶಿವಪೂಜಕನೆಂದು ನಮೋ ಎಂಬುವೆನಯ್ಯಾ ಬರಿದೆ 'ನಾ ಶಿವಪೂಜೆ' 'ನೀ ಶಿವಪೂಜಕ'ನೆಂದು ತಿರುಗುವ ಮೂಳ ಹೊಲೆಯರ ಮುಖವ ನೋಡಲಾಗದು ಕಾಣಾ ಕೂಡಲಾದಿ ಚನ್ನಸಂಗಮದೇವಾ.
--------------
ಕೂಡಲಸಂಗಮೇಶ್ವರ
ನಾದಬಿಂದುಕಳಾತೀತಲಿಂಗವನು, ಒಬ್ಬ ಪುರುಷನು ಉನ್ಮನಿಯ ಬಾಗಿಲ ಮುಂದೆ ನಿಂದು ಜಂಗಮರೂಪಿನಿಂದ ಲಿಂಗಧ್ಯಾನ ಮಹಾಧ್ಯಾನಮಂ ಮಾಡಿ, ಪಶ್ಚಿಮದಿಕ್ಕಿನಲ್ಲಿ ನಿಂದು ಚಿತ್ರಿಕನಾಗಿ ಎರಡು ಕಮಲಂಗಳ ರಚಿಸಿ, ಅಷ್ಟಕುಳಪರ್ವತದ ಮೇಲೆ ಲಿಂಗಾರ್ಚನೆಯಂ ಮಾಡಿ, ನವಸ್ಥಲದ ಗುಡಿಯ ಶಿಖರವಿಡಿದಿರಲು, ಒಸರುವ ಕೆರೆಬಾವಿಗಳು ಬತ್ತಿದವು ನೋಡಾ! ಸಪ್ತದ್ವೀಪಂಗಳ ರಚಿಸಿದ ನಿಶ್ಚಿಂತ ನಿರಾಕುಳವೆಂಬ ಸಿಂಹಾಸನದ ಮೇಲೆ ಪರಂಜ್ಯೋತಿಯೆಂಬ ಲಿಂಗವು ತೊಳಗಿ ಬೆಳಗುತಿರ್ಪುದು ನೋಡಾ! ಆ ಲಿಂಗದ ಬೆಳಗಿನೊಳಗೆ ಅನಂತಕೋಟಿ ಸೋಮಸೂರ್ಯರ ಬೆಳಗು ನೋಡಾ! ಆ ಲಿಂಗಕ್ಕೆ ಸಜ್ಜನವೆಂಬ ಮಜ್ಜನವ ನೀಡಿ, ಅಂತರಂಗದ ಬೆಳಗಿನ ಮಹಾಚಿದ್ವಿಭೂತಿಯಂ ಧರಿಸಿ, ನಿರ್ಮಲವೆಂಬ ಗಂಧವನೊರೆದು, ಸುಜ್ಞಾನವೆಂಬ ಅಕ್ಷತೆಯನಿಟ್ಟು, ನಿರ್ಭಾವವೆಂಬ ಪತ್ರಿಯನೇರಿಸಿ, ನಿದ್ರ್ವಂದ್ವವೆಂಬ ಧೂಪವ ತೋರಿ, ಭಕ್ತನೆಂಬ ಅಡ್ಡಣಿಗೆ,ಮಹೇಶ್ವರನೆಂಬ ಹರಿವಾಣ, ಪ್ರಸಾದಿಯೆಂಬ ನೈವೇದ್ಯ, ಪ್ರಾಣಲಿಂಗಿಯೆಂಬ ತೈಲ, ಶರಣನೆಂಬ ಮೇಲೋಗರ, ಐಕ್ಯನೆಂಬ ಭೋಜಿಯನು ಆ ಲಿಂಗಕ್ಕೆ ತೃಪ್ತಿಯನೆಯ್ದಿಸಿ, ಮನಜ್ಞಾನವೆ ವೀಳ್ಯೆಯ, ಸುಜ್ಞಾನವೆ ಅಡಕಿ, ಪರಮಜ್ಞಾನವೆ ಸುಣ್ಣ, ಮಹಾಜ್ಞಾನವೆ ತಾಂಬೂಲ, ಅಜಾಂಡಬ್ರಹಾಂಡ್ಮವೆ ಕುಕ್ಷಿ, ಅಲ್ಲಿಂದತ್ತ ಮಹಾಲಿಂಗದ ಬೆಳಗು, ಸ್ವಯಾನಂದದ ತಂಪು, ನಿರಂಜನದ ಸುಖ, ಪರಿಪೂರ್ಣವೆಂಬ ಆಶ್ರಮದಲ್ಲಿ ತೊಳಗಿ ಬೆಳಗುವ ಮಹಾಮಹಿಮಂಗೆ ಓಂ ನಮಃ ಓಂ ನಮಃ ಎನುತಿರ್ದೆನಯ್ಯ ಝೇಂಕಾರ ನಿಜಲಿಂಗಪ್ರಭುವೆ.
--------------
ಜಕ್ಕಣಯ್ಯ
ಒಬ್ಬ ಶಿವಶರಣನು ಶಿವರಾತ್ರಿಯಲ್ಲಿ ನಿತ್ಯ ಶಿವಯೋಗವ ಮಾಡುವುದ ಕಂಡೆನಯ್ಯ. ಅದು ಹೇಗೆಂದಡೆ: ಅರುಹೆಂಬ ಸಮ್ಮಾರ್ಜನೆಯ ಮಾಡಿ, ಕುರುಹೆಂಬ ಗದ್ದುಗೆಯ ನೆಲೆಯಂಗೊಳಿಸಿ, ಸುಜ್ಞಾನವೆಂಬ ರಂಗವಾಲಿಯ ತುಂಬಿ, ಚಂದ್ರಸೂರ್ಯಾದಿಗಳೆಂಬ ದೀವಿಗೆಯ ಮುಟ್ಟಿಸಿ, ಮಹಲಿಂಗವೆಂಬ ಮೂರ್ತಿಯಂ ನೆಲೆಯಂಗೊಳಿಸಿ, ಆ ಲಿಂಗಕ್ಕೆ ಸಜ್ಜನವೆಂಬ ಮಜ್ಜನವಂ ನೀಡಿ, ಅಂತರಂಗದ ಬೆಳಗಿನ ಮಹಾಚಿದ್ವಿಭೂತಿಯಂ ಧರಿಸಿ, ನಿರ್ಮಳವೆಂಬ ಗಂಧವನೊರೆದು, ಸುಜ್ಞಾನವೆಂಬ ಅಕ್ಷತೆಯನಿಟ್ಟು, ನಿರ್ಭಾವವೆಂಬ ಪತ್ರಿಯನೇರಿಸಿ, ನಿದ್ರ್ವಂದ್ವವೆಂಬ ಧೂಪವ ತೋರಿ, ಒಬ್ಬ ಮೂರ್ತಿ ನವರತ್ನದ ಹರಿವಾಣದಲ್ಲಿ ಪಂಚಾರ್ತಿಯ ಮೇಲೆ ಏಕಾರ್ತಿಯನಿಕ್ಕಿ, ಪಂಚದೀಪಂಗಳ ರಚಿಸಿ, ಆ ಲಿಂಗಕ್ಕೆ ಓಂ ನಮೋ ಓಂ ನಮೋ ಎಂದು ಬೆಳಗುತಿರ್ಪರು ನೋಡಾ ಝೇಂಕಾರ ನಿಜಲಿಂಗಪ್ರಭುವೆ.
--------------
ಜಕ್ಕಣಯ್ಯ
ನವನಾಳಂಗಳ ಬಲಿದು ಶಿವಧ್ಯಾನದಲ್ಲಿ ಕುಳ್ಳಿರ್ದು ಭಾವದ ದೃಕ್ಕಿನಿಂದ ನವಲಿಂಗಗಳ ನೋಡಿ ಪೂಜಿಸಿ, ಕದಡುವ ಭೇದವೆಂತೆಂದೊಡೆ : ಆಧಾರಚಕ್ರವೆಂಬ ರಂಗಮಂಟಪದಲ್ಲಿ ಮೂರ್ತಿಗೊಂಡಿರ್ದ ಆಚಾರಲಿಂಗಕ್ಕೆ ಶಿವಾನಂದ ಜಲದಿಂ ಮಜ್ಜನಕ್ಕೆರೆದು ಪೃಥ್ವಿ ನಿವೃತ್ತಿಯಾದ ಗಂಧವ ಧರಿಸಿ, ಚಿತ್ತ ಸುಚಿತ್ತವಾದ ಅಕ್ಷತೆಯನಿಟ್ಟು, ಅಲ್ಲಿಯ ಚತುರ್ದಳಂಗಳನೆ ಪುಷ್ಪದ ಮಾಲೆಯೆಂದು ಧರಿಸಿ, ಅಲ್ಲಿಯ ಕಮಲಸದ್ವಾಸನೆಯ ಧೂಪವ ಬೀಸಿ, ಅಲ್ಲಿಯ ಪೀತವರ್ಣವನೆ ಕರ್ಪುರದ ಜ್ಯೋತಿಯೆಂದು ಬೆಳಗಿ, ಅಲ್ಲಿಯ ಜಾಗ್ರಾವಸ್ಥೆಯೆಂಬ ನವೀನ ವಸ್ತ್ರವ ಹೊದಿಸಿ, ನಿಷ್ಕಾಮವೆಂಬ ಆಭರಣವ ತೊಡಿಸಿ, ಸುಗಂಧವೆಂಬ ನೈವೇದ್ಯವನರ್ಪಿಸಿ, ಶ್ರದ್ಧೆಯೆಂಬ ತಾಂಬೂಲವನಿತ್ತು, ಇಂತು ಆಚಾರಲಿಂಗದ ಅಷ್ಟವಿಧಾರ್ಚನೆಯ ಮಾಡಿ, ಕೋಟಿಸೂರ್ಯಪ್ರಭೆಯಂತೆ ಬೆಳಗುವ ಆಚಾರಲಿಂಗವನು ಕಂಗಳು ತುಂಬಿ ನೋಡಿ ಮನದಲ್ಲಿ ಸಂತೋಷಂಗೊಂಡು ಆ ಆಚಾರಲಿಂಗದ ಪೂಜೆಯ ನಿರ್ಮಾಲ್ಯವ ಮಾಡದೆ ಓಂ ನಂ ನಂ ನಂ ನಂ ನಂ ನಂ ಎಂಬ ನಕಾರಷಡ್ವಿಧಮಂತ್ರಂಗಳಿಂದೆ ನಮಸ್ಕರಿಸಿ, ಆ ಆಚಾರಲಿಂಗವನು ಕೂಡಿ ಎರಡಳಿದು ಅಲ್ಲಿಂದ ಮುಂದಕ್ಕೆ ಹೋಗಿ, ಸ್ವಾಧಿಷಾ*ನಚಕ್ರವೆಂಬ ರಂಗಮಂಟಪದಲ್ಲಿ ಮೂರ್ತಿಗೊಂಡಿರ್ದ ಗುರುಲಿಂಗಕ್ಕೆ ಪರಿಣಾಮವೆಂಬ ಜಲದಿಂ ಮಜ್ಜನಕ್ಕೆರೆದು, ಅಪ್ಪು ನಿವೃತ್ತಿಯಾದ ಗಂಧವ ಧರಿಸಿ ಬುದ್ಧಿ ಸುಬುದ್ಧಿಯಾದ ಅಕ್ಷತೆಯನಿಟ್ಟು ಅಲ್ಲಿಯ ಷಡುದಳಂಗಳನೆ ಪುಷ್ಪದ ಮಾಲೆಯೆಂದು ಧರಿಸಿ, ಅಲ್ಲಿಯ ಕಮಲ ಸದ್ವಾಸನೆಯ ಧೂಪವ ಬೀಸಿ, ಅಲ್ಲಿಯ ನೀಲವರ್ಣವನೆ ಕರ್ಪುರದ ಜ್ಯೋತಿಯೆಂದು ಬೆಳಗಿ ಅಲ್ಲಿಯ ಸ್ವಪ್ನಾವಸ್ಥೆಯೆಂಬ ವಸ್ತ್ರವ ಹೊದಿಸಿ ನಿಃಕ್ರೋಧವೆಂಬ ಆಭರಣವ ತೊಡಿಸಿ ಸುರುಚಿಯೆಂಬ ನೈವೇದ್ಯವನರ್ಪಿಸಿ, ನಿಷೆ*ಯೆಂಬ ತಾಂಬೂಲವನಿತ್ತು, ಇಂತು ಗುರುಲಿಂಗದ ಅಷ್ಟವಿಧಾರ್ಚನೆಯ ಮಾಡಿ, ಕೋಟಿಸೂರ್ಯಪ್ರಭೆಯಂತೆ ಬೆಳಗುವ ಗುರುಲಿಂಗವನು ಕಂಗಳು ತುಂಬಿ ನೋಡಿ ಮನದಲ್ಲಿ ಸಂತೋಷಂಗೊಂಡು ಆ ಗುರುಲಿಂಗದ ಪೂಜೆಯ ನಿರ್ಮಾಲ್ಯವ ಮಾಡದೆ, ಓಂ ಮಂ ಮಂ ಮಂ ಮಂ ಮಂ ಮಂ ಎಂಬ ಮಕಾರಷಡ್ವಿಧಮಂತ್ರಂಗಳಿಂದೆ ನಮಸ್ಕರಿಸಿ, ಆ ಗುರುಲಿಂಗವನು ಕೂಡಿ ಎರಡಳಿದು ಅಲ್ಲಿಂದ ಮುಂದಕ್ಕೆ ಹೋಗಿ ಮಣಿಪೂರಕವೆಂಬ ರಂಗಮಂಟಪದಲ್ಲಿ ಮೂರ್ತಿಗೊಂಡಿರ್ದ ಶಿವಲಿಂಗಕ್ಕೆ ಪರಮಾನಂದವೆಂಬ ಜಲದಿಂ ಮಜ್ಜನಕ್ಕೆರೆದು, ಅಗ್ನಿನಿವೃತ್ತಿಯಾದ ಗಂಧವ ಧರಿಸಿ ಅಹಂಕಾರ ನಿರಹಂಕಾರವಾದ ಅಕ್ಷತೆಯನಿಟ್ಟು ಅಲ್ಲಿಯ ದಶದಳಂಗಳನೆ ಪುಷ್ಪದಮಾಲೆಯೆಂದು ಧರಿಸಿ ಅಲ್ಲಿ ಕಮಲ ಸದ್ವಾಸನೆಯ ಧೂಪವ ಬೀಸಿ ಅಲ್ಲಿಯ ಕೆಂಪುವರ್ಣವನೆ ಕರ್ಪುರದ ಜ್ಯೋತಿಯೆಂದು ಬೆಳಗಿ ಅಲ್ಲಿಯ ಸುಷುಪ್ತಾವಸ್ಥೆಯೆಂಬ ವಸ್ತ್ರವ ಹೊದಿಸಿ ನಿರ್ಲೋಭವೆಂಬ ಆಭರಣವ ತೊಡಿಸಿ ಸುರೂಪವೆಂಬ ನೈವೇದ್ಯವನರ್ಪಿಸಿ ಸಾವಧಾನವೆಂಬ ತಾಂಬೂಲವನಿತ್ತು, ಇಂತು ಶಿವಲಿಂಗದ ಅಷ್ಟವಿಧಾರ್ಚನೆಯ ಮಾಡಿ ಕೋಟಿಸೂರ್ಯಪ್ರಭೆಯಂತೆ ಬೆಳಗುವ ಶಿವಲಿಂಗವನು ಕಂಗಳು ತುಂಬಿ ನೋಡಿ ಮನದಲ್ಲಿ ಸಂತಸಂಗೊಂಡು ಆ ಶಿವಲಿಂಗದ ಪೂಜೆಯ ನಿರ್ಮಾಲ್ಯಮಂ ಮಾಡದೆ, ಓಂ ಶಿಂ ಶಿಂ ಶಿಂ ಶಿಂ ಶಿಂ ಶಿಂ ಎಂಬ ಶಿಕಾರಷಡ್ವಿಧಮಂತ್ರಂಗಳಿಂದೆ ನಮಸ್ಕರಿಸಿ, ಆ ಶಿವಲಿಂಗವನು ಕೂಡಿ ಎಡರಳಿದು, ಅಲ್ಲಿಂದ ಮುಂದಕ್ಕೆ ಹೋಗಿ ಅನಾಹತಚಕ್ರವೆಂಬ ರಂಗಮಂಟಪದಲ್ಲಿ ಮೂರ್ತಿಗೊಂಡಿರ್ದ ಜಂಗಮಲಿಂಗಕ್ಕೆ ಶಾಂತಿಯೆಂಬ ಜಲದಿಂ ಮಜ್ಜನಕ್ಕೆರೆದು ವಾಯುನಿವೃತ್ತಿಯಾದ ಗಂಧವ ಧರಿಸಿ ಮನ ಸುಮನವಾದ ಅಕ್ಷತೆಯನಿಟ್ಟು ಅಲ್ಲಿಯ ದ್ವಾದಶದಳಂಗಳನೆ ಪುಷ್ಪದ ಮಾಲೆಯೆಂದು ಧರಿಸಿ, ಅಲ್ಲಿಯ ಕಮಲ ಸದ್ವಾಸನೆಯ ಧೂಪವ ಬೀಸಿ ಅಲ್ಲಿಯ ಮಾಂಜಿಷ್ಟವರ್ಣವನೆ ಕರ್ಪುರದಜ್ಯೋತಿಯೆಂದು ಬೆಳಗಿ, ಅಲ್ಲಿಯ ತೂರ್ಯಾವಸ್ಥೆಯೆಂಬ ವಸ್ತ್ರವ ಹೊದಿಸಿ ನಿರ್ಮೋಹವೆಂಬ ಆಭರಣವ ತೊಡಿಸಿ ಸುಸ್ಪರ್ಶನವೆಂಬ ನೈವೇದ್ಯವನರ್ಪಿಸಿ ಅನುಭಾವವೆಂಬ ತಾಂಬೂಲವನಿತ್ತು ಇಂತು ಜಂಗಮಲಿಂಗಕ್ಕೆ ಅಷ್ಟವಿಧಾರ್ಚನೆಯ ಮಾಡಿ, ಕೋಟಿಸೂರ್ಯಪ್ರಭೆಯಂತೆ ಬೆಳಗುವ ಜಂಗಮಲಿಂಗವನು ಕಂಗಳು ತುಂಬಿ ನೋಡಿ ಮನದಲ್ಲಿ ಸಂತೋಷಂಗೊಂಡು ಆ ಜಂಗಮಲಿಂಗದ ಪೂಜೆಯ ನಿರ್ಮಾಲ್ಯವ ಮಾಡದೆ ಓಂ ವಾಂ ವಾಂ ವಾಂ ವಾಂ ವಾಂ ವಾಂ ಎಂಬ ವಕಾರಷಡ್ವಿಧಮಂತ್ರಂಗಳಿಂದೆ ನಮಸ್ಕರಿಸಿ, ಆ ಜಂಗಮಲಿಂಗವನು ಕೂಡಿ ಎರಡಳಿದು, ಅಲ್ಲಿಂದ ಮುಂದಕ್ಕೆ ಹೋಗಿ ವಿಶುದ್ಧಿಚಕ್ರವೆಂಬ ರಂಗಮಂಟಪದಲ್ಲಿ ಮೂರ್ತಿಗೊಂಡಿರ್ದ ಪ್ರಸಾದಲಿಂಗಕ್ಕೆ ಕ್ಷಮೆಯೆಂಬ ಜಲದಿಂ ಮಜ್ಜನಕ್ಕೆರೆದು ಗಗನನಿವೃತ್ತಿಯಾದ ಗಂಧವ ಧರಿಸಿ, ಜ್ಞಾನ ಸುಜ್ಞಾನವಾದ ಅಕ್ಷತೆಯನಿಟ್ಟು, ಅಲ್ಲಿಯ ಷೋಡಶದಳಂಗಳನೆ ಪುಷ್ಪದ ಮಾಲೆಯೆಂದು ಧರಿಸಿ, ಅಲ್ಲಿಯ ಕಮಲಸದ್ವಾಸನೆಯ ಧೂಪವ ಬೀಸಿ, ಅಲ್ಲಿಯ ಕೃಷ್ಣವರ್ಣವನೆ ಕರ್ಪುರದ ಜ್ಯೋತಿಯೆಂದು ಬೆಳಗಿ, ಅಲ್ಲಿಯ ತೂರ್ಯಾತೀತಾವಸ್ಥೆಯೆಂಬ ವಸ್ತ್ರವ ಹೊದಿಸಿ ನಿರ್ಮದವೆಂಬ ಆಭರಣವ ತೊಡಿಸಿ ಸುಶಬ್ದವೆಂಬ ನೈವೇದ್ಯವನರ್ಪಿಸಿ ಆನಂದವೆಂಬ ತಾಂಬೂಲವನಿತ್ತು, ಇಂತು ಪ್ರಸಾದಲಿಂಗದ ಅಷ್ಟವಿಧಾರ್ಚನೆಯ ಮಾಡಿ ಕೋಟಿ ಸೂರ್ಯಪ್ರಭೆಯಂತೆ ಬೆಳಗುವ ಪ್ರಸಾದಲಿಂಗವನು ಕಂಗಳು ತುಂಬಿ ನೋಡಿ ಮನದಲ್ಲಿ ಸಂತೋಷಂಗೊಂಡು ಆ ಪ್ರಸಾದಲಿಂಗದ ಪೂಜೆಯ ನಿರ್ಮಾಲ್ಯವ ಮಾಡದೆ ಓಂ ಯಂ ಯಂ ಯಂ ಯಂ ಯಂ ಯಂ ಎಂಬ ಯಕಾರಷಡ್ವಿಧಮಂತ್ರಂಗಳಿಂದೆ ನಮಸ್ಕರಿಸಿ, ಆ ಪ್ರಸಾದಲಿಂಗವನು ಕೂಡಿ ಎರಡಳಿದು, ಅಲ್ಲಿಂದ ಮುಂದಕ್ಕೆ ಹೋಗಿ ಆಜ್ಞಾಚಕ್ರವೆಂಬ ರಂಗಮಂಟಪದಲ್ಲಿ ಮೂರ್ತಿಗೊಂಡಿರ್ದ ಮಹಾಲಿಂಗಕ್ಕೆ ಸಂತೋಷವೆಂಬ ಜಲದಿಂ ಮಜ್ಜನಕ್ಕೆರೆದು ಆತ್ಮನಿವೃತ್ತಿಯಾದ ಗಂಧವ ಧರಿಸಿ, ಭಾವ ಸದ್ಭಾವವಾದ ಅಕ್ಷತೆಯನಿಟ್ಟು, ಅಲ್ಲಿಯ ದ್ವಿದಳಂಗಳನೆ ಪುಷ್ಪದಮಾಲೆಯೆಂದು ಧರಿಸಿ, ಅಲ್ಲಿಯ ಕಮಲಸದ್ವಾಸನೆಯ ಧೂಪವ ಬೀಸಿ ಅಲ್ಲಿಯ ಮಾಣಿಕ್ಯವರ್ಣವನೆ ಕರ್ಪುರದಜ್ಯೋತಿಯೆಂದು ಬೆಳಗಿ, ಅಲ್ಲಿಯ ನಿರಾವಸ್ಥೆಯೆಂಬ ವಸ್ತ್ರವ ಹೊದಿಸಿ ನಿರ್ಮಲವೆಂಬ ಆಭರಣವ ತೊಡಿಸಿ ಸುತೃಪ್ತಿಯೆಂಬ ನೈವೇದ್ಯವನರ್ಪಿಸಿ ಸಮರಸವೆಂಬ ತಾಂಬೂಲವನಿತ್ತು, ಇಂತು ಮಹಾಲಿಂಗದ ಅಷ್ಟವಿಧಾರ್ಚನೆಯ ಮಾಡಿ ಕೋಟಿಸೂರ್ಯಪ್ರಭೆಯಂತೆ ಬೆಳಗುವ ಮಹಾಲಿಂಗವನು ಕಂಗಳು ತುಂಬಿ ನೋಡಿ ಮನದಲ್ಲಿ ಸಂತೋಷಂಗೊಂಡು ಆ ಮಹಾಲಿಂಗದ ಪೂಜೆಯ ನಿರ್ಮಾಲ್ಯವ ಮಾಡದೆ, ಓಂ ಒಂ ಒಂ ಒಂ ಒಂ ಒಂ ಒಂ ಎಂಬ ಓಂಕಾರಷಡ್ವಿಧಮಂತ್ರಂಗಳಿಂದೆ ನಮಸ್ಕರಿಸಿ, ಆ ಮಹಾಲಿಂಗವನು ಕೂಡಿ ಎರಡಳಿದು ಅಲ್ಲಿಂದ ಮುಂದಕ್ಕೆ ಹೋಗಿ ಬ್ರಹ್ಮರಂಧ್ರವೆಂಬ ಸಹಸ್ರದಳಮಂಟಪದಲ್ಲಿ ಮೂರ್ತಿಗೊಂಡಿರ್ದ ನಿಷ್ಕಳಲಿಂಗಕ್ಕೆ ಅನುಪಮವೆಂಬ ಜಲದಿಂ ಮಜ್ಜನಕ್ಕೆರೆದು ಅನಾದಿಯೆಂಬ ಗಂಧವ ಧರಿಸಿ, ಅಗಮ್ಯವೆಂಬ ಅಕ್ಷತೆಯನಿಟ್ಟು ಅವಿರಳವೆಂಬ ಪುಷ್ಪದ ಮಾಲೆಯ ಧರಿಸಿ, ಅಪ್ರಮಾಣವೆಂಬ ಧೂಪವ ಬೀಸಿ ಅಖಂಡವೆಂಬ ಜ್ಯೋತಿಯ ಬೆಳಗಿ ಸತ್ಯವೆಂಬ ವಸ್ತ್ರವ ಹೊದಿಸಿ ಸದಾನಂದವೆಂಬ ಆಭರಣವ ತೊಡಿಸಿ ನಿತ್ಯವೆಂಬ ನೈವೇದ್ಯವನರ್ಪಿಸಿ ನಿರುಪಮವೆಂಬ ತಾಂಬೂಲವನಿತ್ತು, ಇಂತು ನಿಷ್ಕಲಲಿಂಗದ ಅಷ್ಟವಿಧಾರ್ಚನೆಯ ಮಾಡಿ ಅನಂತಕೋಟಿಸೂರ್ಯಪ್ರಭೆಯಂತೆ ಬೆಳಗುವ ನಿಷ್ಕಲಲಿಂಗವನು ಕಂಗಳು ತುಂಬಿ ನೋಡಿ ಮನದಲ್ಲಿ ಸಂತೋಷಂಗೊಂಡು ಆ ನಿಷ್ಕಲಲಿಂಗದ ಪೂಜೆಯ ನಿರ್ಮಾಲ್ಯವ ಮಾಡದೆ ಅಗಣಿತವೆಂಬ ನಮಸ್ಕಾರಮಂ ಮಾಡಿ, ಆ ನಿಷ್ಕಲಲಿಂಗವನು ಕೂಡಿ ಎರಡಳಿದು, ಅಲ್ಲಿಂದ ಮುಂದಕ್ಕೆ ಹೋಗಿ ಶಿಖಾಚಕ್ರವೆಂಬ ತ್ರಿದಳಮಂಟಪದಲ್ಲಿ ಮೂರ್ತಿಗೊಂಡಿರ್ದ ಶೂನ್ಯಲಿಂಗಕ್ಕೆ ನಿರ್ಭಾವವೆಂಬ ಜಲದಿಂ ಮಜ್ಜನಕ್ಕೆರೆದು, ನಿರ್ಜಾತವೆಂಬ ಗಂಧವ ಧರಿಸಿ ನಿರ್ಜಡವೆಂಬ ಅಕ್ಷತೆಯನಿಟ್ಟು ನಿಧ್ರ್ವಂದ್ವವೆಂಬ ಪುಷ್ಪದಮಾಲೆಯ ಧರಿಸಿ ನಿರ್ಲಜ್ಜೆಯೆಂಬ ಧೂಪವ ಬೀಸಿ ನಿರಾಭಾರವೆಂಬ ಜ್ಯೋತಿಯ ಬೆಳಗಿ ನಿರಾಮಯವೆಂಬ ವಸ್ತ್ರವ ಹೊದಿಸಿ ನಿಸ್ಪೃಹವೆಂಬ ಆಭರಣವ ತೊಡಸಿ ನಿರಾಳವೆಂಬ ನೈವೇದ್ಯವನರ್ಪಿಸಿ ನಿರಾಲಂಬವೆಂಬ ತಾಂಬೂಲವನಿತ್ತು, ಇಂತು ಶೂನ್ಯಲಿಂಗದ ಅಷ್ಟವಿಧಾರ್ಚನೆಯಂ ಮಾಡಿ, ಅಗಣಿತ ಕೋಟಿಸೂರ್ಯ ಪ್ರಭೆಯಂತೆ ಬೆಳಗುವ ಶೂನ್ಯಲಿಂಗವನು ಕಂಗಳು ತುಂಬಿ ನೋಡಿ ಮನದಲ್ಲಿ ಸಂತೋಷಂಗೊಂಡು ಆ ಶೂನ್ಯಲಿಂಗದ ಪೂಜೆಯ ನಿರ್ಮಾಲ್ಯವ ಮಾಡದೆ ನಿರ್ಭೇದ್ಯವೆಂಬ ನಮಸ್ಕಾರಮಂ ಮಾಡಿ ಆ ಶೂನ್ಯಲಿಂಗವನು ಕೂಡಿ ಎರಡಳಿದು, ಅಲ್ಲಿಂದ ಮುಂದಕ್ಕೆ ಹೋಗಿ, ಪಶ್ಚಿಮಚಕ್ರವೆಂಬ ಏಕದಳಮಂಟಪದಲ್ಲಿ ಮೂರ್ತಿಗೊಂಡಿರ್ದ ನಿರಂಜನಲಿಂಗಕ್ಕೆ ನಿರ್ನಾಮವೆಂಬ ಜಲದಿಂ ಮಜ್ಜನಕ್ಕೆರೆದು ನಿಷ್ಕಾರಣವೆಂಬ ಗಂಧವ ಧರಿಸಿ ನಿಃಸಂಗವೆಂಬ ಅಕ್ಷತೆಯನಿಟ್ಟು ನಿಸ್ಸಾರವೆಂಬ ಪುಷ್ಪವ ಧರಿಸಿ ನಿರುಪಾಧಿಕವೆಂಬ ಧೂಪವ ಬೀಸಿ ನಿಷ್ಕಳೆಯೆಂಬ ಜ್ಯೋತಿಯ ಬೆಳಗಿ ನಿಶ್ಚಲವೆಂಬ ವಸ್ತ್ರವ ಹೊದಿಸಿ ನಿರ್ವಾಸನೆಯೆಂಬ ಆಭರಣವ ತೊಡಿಸಿ ನಿಃಶೂನ್ಯವೆಂಬ ನೈವೇದ್ಯವನರ್ಪಿಸಿ ನಿರವಯವೆಂಬ ತಾಂಬೂಲವನಿತ್ತು, ಇಂತು ನಿರಂಜನಲಿಂಗದ ಅಷ್ಟವಿಧಾರ್ಚನೆಯ ಮಾಡಿ ತೆರಹಿಲ್ಲದೆ ಬೆಳಗಿನ ಮಹಾಬೆಳಗನೊಳಕೊಂಡು ಬೆಳಗುವ ನಿರಂಜನಲಿಂಗವನು ಕಂಗಳು ತುಂಬಿ ನೋಡಿ, ಮನದಲ್ಲಿ ಸಂತೋಷಂಗೊಂಡು ಆ ನಿರಂಜನಲಿಂಗದ ಪೂಜೆಯ ನಿರ್ಮಾಲ್ಯವ ಮಾಡದೆ, ನಿಃಶಬ್ದವೆಂಬ ನಮಸ್ಕಾರಮಂ ಮಾಡಿ ಆ ನಿರಂಜನಲಿಂಗವನು ಕೂಡಿ ಎರಡಳಿದು ಅಲ್ಲಿಂದ ಮುಂದೆ ನೋಡಲು ಬಚ್ಚಬರಿಯ ಬಯಲಿರ್ಪುದ ಕಂಡು ಆ ಬಯಲೆ ತನ್ನ ನಿಜನಿವಾಸವೆಂದು ತಿಳಿದು ಆ ನಿಜವಾಸದಲ್ಲಿ ತಾ ನಿಂದು ತನ್ನಿಂದ ಕೆಳಗಣ ನವಚಕ್ರಂಗಳಲ್ಲಿರ್ದ ನವಲಿಂಗಗಳ ಪೂಜೆಯ ನಿರಂತರದಲ್ಲಿ ಮಾಡುವ ಶಿವಯೋಗಿಗೆ ಭವಬಂಧನವಿಲ್ಲ. ಆ ಭವಬಂಧನವಿಲ್ಲವಾಗಿ ಜೀವಕಲ್ಪಿತವು ಮುನ್ನವೇ ಇಲ್ಲ. ಆ ಜೀವಕಲ್ಪಿತವಿಲ್ಲವಾಗಿ ಆತನು ಪರಿಪೂರ್ಣನಾಗಿ ಪರಾತ್ಪರನಾಗಿ ಪರಶಿವಬ್ರಹ್ಮವೇ ಆಗಿ ಇರ್ಪನಯ್ಯಾ ಅಖಂಡೇಶ್ವರಾ.
--------------
ಷಣ್ಮುಖಸ್ವಾಮಿ
ಆಧಾರವೆಂಬ ಹಾವುಗೆಯ ಮೆಟ್ಟಿ, ವಿಷಯ ವ್ಯಸನಂಗಳೆಂಬ ಸರ್ಪಳಿಯಂ ಹಾಕಿ, ಜನನ ಮರಣಂಗಳೆಂಬ ಜಂಗವ ಕಟ್ಟಿ, ಸಲಿಲವೆಂಬ ಕೌಪವ ಹಾಕಿ, ನಿರ್ಧಾರವೆಂಬ ಕಟಿಯಂ ಧರಿಸಿ, ಅಷ್ಟಮದಂಗಳೆಂಬ ಯೋಗವಟ್ಟಿಗೆಯಂ ಹಾಕಿ, ಕುಂಡಲಿಯೆಂಬ ನಾಗಬೆತ್ತಮಂ ಪಿಡಿದು, ಭಾವವೆಂಬ ಕಪನಿಯಂ ಧರಿಸಿ, ಚಂದ್ರಸೂರ್ಯಾದಿಗಳೆಂಬ ಸರವ ಹಾಕಿ, ಓಂಕಾರವೆಂಬ ಪಾವಡವ ಸುತ್ತಿ, ಹೃದಯಧಾರಣವೆಂಬ ಸೆಜ್ಜೆಯಂ ಮಾಡಿ, ಕಂಠಸ್ಥಾನವೆಂಬ ಶಿವದಾರವಂ ಮಾಡಿ, ಮಹಾಲಿಂಗವೆಂಬ ಮೂರ್ತಿಯಂ ನೆಲೆಗೊಳಿಸಿ, ಆ ಲಿಂಗಕ್ಕೆ ಸಜ್ಜನವೆಂಬ ಮಜ್ಜನ ನೀಡಿ, ಅಂತರಂಗದ ಬೆಳಗಿನ ಚಿದ್ವಿಭೂತಿಯಂ ಧರಿಸಿ, ನಿರ್ಮಲವೆಂಬ ಗಂಧವನೊರೆದು, ಸುಜ್ಞಾನವೆಂಬ ಅಕ್ಷತೆಯನಿಟ್ಟು, ನಿರ್ಭಾವವೆಂಬ ಪತ್ರಿಯನೇರಿಸಿ, ನಿದ್ರ್ವಂದ್ವವೆಂಬ ಧೂಪವ ತೋರಿ, ಆ ಲಿಂಗಕ್ಕೆ ಒಬ್ಬ ಸತಿಯಳು ಭಕ್ತನೆಂಬ ಅಡ್ಡಣಿಗೆಯ ಮೇಲೆ ಮಾಹೇಶ್ವರನೆಂಬ ಹರಿವಾಣವನಿಕ್ಕಿ, ಮಹಾಪ್ರಸಾದವ ನೆಲೆಯಂಗೊಂಡು, ಪ್ರಾಣಲಿಂಗಿಯೆಂಬ ತುಪ್ಪವನೆರೆದು, ಶರಣನೆಂಬ ಸಕ್ಕರೆಯಂ ತಳೆದು, ಆ ಸತಿಯಳು ಆ ಲಿಂಗಕ್ಕೆ ನೈವೇದ್ಯವ ತೋರುತಿರ್ಪಳು ನೋಡಾ ! ಆ ಲಿಂಗಕ್ಕೆ ನಾದವಾಲಗವಂ ಮಾಡುವುದ ಕಂಡೆನಯ್ಯ. ಅದು ಹೇಗೆಂದಡೆ- ಬ್ರಹ್ಮಂಗೆ ತಾಳ, ವಿಷ್ಣುವಿಂಗೆ ವೇಣು, ರುದ್ರಂಗೆ ಮೃದಂಗ, ಈಶ್ವರಂಗೆ ಉಪಾಂಗ, ಸದಾಶಿವಂಗೆ ಗಾಯನ, ಈ ಐವರು ನಾದದ ವಾಲಗವ ಮಾಡುವುದ ಕಂಡೆನಯ್ಯ. ಆದಿಶಕ್ತಿ ಮಂತ್ರಶಕ್ತಿ ಕ್ರಿಯಾಶಕ್ತಿ ಇಚ್ಫಾಶಕ್ತಿ ಜ್ಞಾನಶಕ್ತಿ ಈ ಐವರೂ ನಾಂಟ್ಯವನಾಡುತಿರ್ಪರು ನೋಡಾ ! ನವನಾಳದಲ್ಲಿ ನವಮೂರ್ತಿಗಳು ನವದೀಪವ ನವಧೂಪವ ಬೆಳಗುತಿರ್ಪರು ನೋಡಾ ! ಸೋಪಾನವಿಡಿದು ಪ್ರಣವಬೆಳಗಿನೊಳು ಸುಳಿದಾಡುವ ಜಂಗಮಕ್ಕೆ ಓಂ ನಮೋ ಓಂ ನಮೋ ಓಂ ನಮೋ ಎನುತಿರ್ದೆನಯ್ಯ ಝೇಂಕಾರ ನಿಜಲಿಂಗಪ್ರಭುವೆ.
--------------
ಜಕ್ಕಣಯ್ಯ
ತನ್ನಿಂದ ತಾನಾದವನು, ಉನ್ಮನಿಯ ಬಾಗಿಲ ಮುಂದೆ ನಿಂದು ಬತ್ತಲೆಯಾದ ಭಾಮಿನಿಯ ಕರೆದು, ಮಹಾಜ್ಞಾನವೆಂಬ ಹಸ್ತದಿಂದ ಹವಳ ನೀಲ ರತ್ನ ಪಚ್ಚೆ ಮುತ್ತು ಮಾಣಿಕ್ಯದ ಗದ್ದುಗೆಯ ಮೇಲೆ ಮಹಾಲಿಂಗವೆಂಬ ಮೂರ್ತಿಯ ನೆಲೆಯಂಗೊಳಿಸಿ ಆ ಲಿಂಗಕ್ಕೆ ಸಜ್ಜನವೆಂಬ ಮಜ್ಜನವ ನೀಡಿ, ಅಂತರಂಗದ ಬೆಳಗಿನ ಮಹಾ ಚಿದ್ವಿಭೂತಿಯಂ ಧರಿಸಿ, ನಿರ್ಮಲವೆಂಬ ಗಂಧವನೊರೆದು, ಸುಜ್ಞಾನವೆಂಬ ಅಕ್ಷತೆಯನಿಟ್ಟು, ನಿರ್ಭಾವವೆಂಬ ಪತ್ರಿಯನೇರಿಸಿ, ನಿದ್ರ್ವಂದ್ವವೆಂಬ ಧೂಪವ ತೋರಿ, ಭಕ್ತನೆಂಬ ಅಡ್ಡಣಿಗೆಯ ಮೇಲೆ, ಮಹೇಶ್ವರನೆಂಬ ಹರಿವಾಣವನಿಕ್ಕಿ, ಮಹಾಪ್ರಸಾದವ ನೆಲೆಯಂಗೊಂಡು ಪ್ರಾಣಲಿಂಗಿಯೆಂಬ ತುಪ್ಪವನೆರೆದು ಶರಣನೆಂಬ ಸಕ್ಕರೆಯ ತಳೆದು ಆ ಲಿಂಗಕ್ಕೆ ತೃಪ್ತಿಯನೆಯ್ದಿಸುತಿರ್ಪಳು ನೋಡಾ! ನವರತ್ನದ ಹರಿವಾಣದೊಳಗೆ ಸಪ್ತದ್ವೀಪಂಗಳ ರಚಿಸಿ ಓಂ ನಮೋ ಓಂ ನಮೋ, ಓಂ ನಮೋ ಶಿವಾಯಯೆಂದು ಬೆಳಗುತಿಪ್ಪಳು ನೋಡಾ. ಝೇಂಕಾರ ನಿಜಲಿಂಗಪ್ರಭುವೆ.
--------------
ಜಕ್ಕಣಯ್ಯ
ಜ್ಞಾನವೆಂಬ ಗದ್ದುಗೆಯ ಮೇಲೆ ಸದಮಲವೆಂಬ ಪಾವಡವ ಹಾಸಿ, ಪರಬ್ರಹ್ಮವೆಂಬ ಲಿಂಗನ ಮೂರ್ತಿಗೊಳಿಸಿ, ಆ ಲಿಂಗಕ್ಕೆ ಸಜ್ಜನವೆಂಬ ಮಜ್ಜನವ ನೀಡಿ, ಅಂತರಂಗದ ಬೆಳಗಿನ ಮಹಾಚಿದ್ವಿಭೂತಿಯಂ ಧರಿಸಿ, ನಿರ್ಮಲವೆಂಬ ಗಂಧವನೊರೆದು, ಸುಜ್ಞಾನವೆಂಬ ಅಕ್ಷತೆಯನಿಟ್ಟು, ನಿರ್ಭಾವವೆಂಬ ಪತ್ರಿಯನೇರಿಸಿ, ನಿದ್ರ್ವಂದ್ವವೆಂಬ ಧೂಪವ ತೋರಿ, ಹರಹರಾ ಶಿವಶಿವಾಯೆಂದು ಅರ್ಚಿಸುತಿರ್ದೆನಯ್ಯ ಝೇಂಕಾರ ನಿಜಲಿಂಗಪ್ರಭುವೆ.
--------------
ಜಕ್ಕಣಯ್ಯ
ಸರ್ವಮಯವ ಗರ್ಭೀಕರಿಸಿಕೊಂಡಿರ್ದ ಲಿಂಗವ ನೋಡಹೋಗದ ಮುನ್ನ ಅದು ಎನ್ನನೊಳಕೊಂಡಿತ್ತು ನೋಡಾ ! ಅದಕ್ಕೆ ಪಾದ ಒಂದು, ಹಸ್ತ ಮೂರು, ಅಂಗವಾರು, ಮೂವತ್ತಾರು ತಲೆಯು, ಐವತ್ತೆರಡು ನಾಲಗೆಯು, ಒಂಬತ್ತು ಬಾಗಿಲ ದೇಗುಲದೊಳಗೆ ಇಪ್ಪ ಲಿಂಗವನು ಮನೋಹರನೆಂಬ ಪೂಜಾರಿಯು, ನವರತ್ನವೆಂಬ ತೊಂಡಲಂಗಳ ಕಟ್ಟಿ ಗೋಪ್ಯದಿಂದ ಲಿಂಗಾರ್ಚನೆಯಂ ಮಾಡಿ, ಅಂತರಂಗದ ಬೆಳಗಿನ ಮಹಾಚಿದ್ವಿಭೂತಿಯಂ ಧರಿಸಿ, ನಿರ್ಮಲವೆಂಬ ಗಂಧವನೊರೆದು, ಸುಜ್ಞಾನವೆಂಬ ಅಕ್ಷತೆಯನಿಟ್ಟು, ನಿರ್ಭಾವವೆಂಬ ಪತ್ರಿಯನೇರಿಸಿ, ನಿದ್ರ್ವಂದ್ವವೆಂಬ ಧೂಪವ ತೋರೆ, ಆ ಮನೋಹರನೆಂಬ ಪೂಜಾರಿಯ ನಿರ್ವಯಲ ನುಂಗಿತು ನೋಡಾ ಝೇಂಕಾರ ನಿಜಲಿಂಗಪ್ರಭುವೆ.
--------------
ಜಕ್ಕಣಯ್ಯ
-->