ಅಥವಾ

ಒಟ್ಟು 26 ಕಡೆಗಳಲ್ಲಿ , 18 ವಚನಕಾರರು , 23 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಆ ಮಹಾಸದಾಶಿವ ತತ್ವದ ಪಂಚಮುಖದಲ್ಲಿ ಉತ್ಪತ್ಯವಾದ ಪಂಚಮಹಾಭೂತಬ್ರಹ್ಮಾಂಡಕಪಾಲದೊಳು ಪಂಚಭೂತ ಬ್ರಹ್ಮಾಂಡಕಪಾಲ ಉತ್ಪತ್ಯವದೆಂತೆಂದೊಡೆ : ಆ ಮಹಾಶಿವತತ್ವದ ನಿರ್ಭಾವ ಮುಖದಲ್ಲಿ ಆತ್ಮನುತ್ಪತ್ಯವಾದನು. ಆ ಆತ್ಮನಲ್ಲಿ ಆಕಾಶ ಉತ್ಪತ್ಯವಾಯಿತ್ತು. ಆ ಆಕಾಶದಲ್ಲಿ ವಾಯು ಉತ್ಪತ್ಯವಾಯಿತ್ತು. ಆ ವಾಯುವಿನಲ್ಲಿ ಅಗ್ನಿ ಉತ್ಪತ್ಯವಾಯಿತ್ತು. ಆ ಅಗ್ನಿಯಲ್ಲಿ ಅಪ್ಪು ಉತ್ಪತ್ಯವಾಯಿತ್ತು. ಆ ಅಪ್ಪುವಿನಲ್ಲಿ ಪೃಥ್ವಿ ಉತ್ಪತ್ಯವಾಯಿತ್ತು. ಇದಕ್ಕೆ ಈಶ್ವರ ಉವಾಚ : ``ಆತ್ಮನ್ಯಾಕಾಶಸಂಭೂತಿರಾಕಾಶಾದ್ವಾಯು ಸಂಭವಃ | ವಾಯೋರಗ್ನಿಃ ಸಮುತ್ಪತ್ತಿರಗ್ನೇರಾಪ ಉದಾಹೃತಂ | ಅಪ್ ಪೃಥ್ವೀಚ ಸಂಭೂತಿರ್ಲಕ್ಷಣೈಕಪ್ರಭಾವತಃ ||'' ಇಂತೆಂದುದಾಗಿ, ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಪೃಥಿವ್ಯಪ್ತೇಜೋವಾಯ್ವಾಕಾಶಂಗಳಲ್ಲಿ ಪೃಥಿವ್ಯಪ್ತೇಜಸ್ಸುಗಳು ಸಾಕರಾಗಳೂ ವಾಯ್ವಾಕಾಶಂಗಳು ನಿರಾಕಾರಗಳೂ ಆಗಿ, ಸ್ಥೂಲ ಸೂಕ್ಷ್ಮಕಾರಣಂಗಳಾಗಿಹವು. ಪೃಥ್ವಿಯಲ್ಲೈದು ಗುಣಗಳೂ ಜಲದಲ್ಲಿ ನಾಲ್ಕು ಗುಣಗಳೂ ಅಗ್ನಿಯಲ್ಲಿ ಮೂರು ಗುಣಗಳೂ ವಾಯುವಿನಲ್ಲಿರಡು ಗುಣಗಳೂ ಇರ್ಪವು. ಆಕಾಶದಲ್ಲೊಂದು ಗುಣವಿರ್ಪುದು. ಆತ್ಮನು ನಿರ್ಗುಣಮಾಗಿ ಸಕಲಗುಣಂಗಳಿಗೂ ತಾನು ಕಾರಣಮಾಗಿಹನು. ಅದೆಂತೆಂದೊಡೆ : ನಿರ್ಗುಣಮಾದ ಬಿಂದುಪದಾರ್ಥವು ಸಗುಣರೂಪಮಾದ ಮನುಷ್ಯರಿಗೆ ತಾನು ಕಾರಣಮಾಗಿರ್ಪಂದದಿ ಆತ್ಮನಿಹನು. ಪಂಚವರ್ಣಂಗಳು ಸತ್ವರಜಸ್ತಮೋಗುಣಂಗಳು. ನಾದ ಬಿಂದು ಕಲೆಗಳು ಬಾಲ್ಯ ಯೌವನ ಕೌಮಾರ ವಾರ್ಧಕ್ಯಂಗಳು. ಇವೆಲ್ಲವೂ ಪ್ರಪಂಚಕ್ಕೆ ಗುಣಂಗಳಲ್ಲದೆ ಆತ್ಮನ ಗುಣವಲ್ಲ. ಅಂತಪ್ಪ ಆತ್ಮನೇ ಶಿವನು, ಆಕಾಶವೇ ವಿಷ್ಣು, ವಾಯುವೇ ಬ್ರಹ್ಮನು. ಸಾಕಾರದಲ್ಲಿ ಅಗ್ನಿಯೇ ರುದ್ರನು, ಜಲವೇ ವಿಷ್ಣು. ಪೃಥ್ವಿಯೇ ಬ್ರಹ್ಮನು. ಇವು ಒಂದಕ್ಕೊಂದು ಸೃಷ್ಟಿ ಸ್ಥಿತಿ ಸಂಹಾರಹೇತುಗಳಾಗಿ, ಎಲ್ಲವೂ ಆತ್ಮನಲ್ಲಿ ಲಯವನೈದುತ್ತಿಹವು. ಅಂತಪ್ಪ ಆತ್ಮಸ್ವರೂಪಮೆತೆಂದೊಡೆ : ದೃಷ್ಟಿಗೋಚರಮಲ್ಲ, ಒಂದು ವಸ್ತುವಿನಲ್ಲಿ ಸಾಮ್ಯಗೋಚರಮಲ್ಲ. ಅದೆಂತೆಂದೊಡೆ : ವಾಯ್ವಾಕಾಶಾತ್ಮಸ್ವರೂಪಿಗಳಾದ ತ್ರಿಮೂರ್ತಿಗಳು. ವಾಯುರೂಪಮಾದ ಬ್ರಹ್ಮನೇ ಲಕ್ಷ್ಮಿಯು, ಆಕಾಶರೂಪಮಾದ ವಿಷ್ಣುವೇ ಮಹಾದೇವಿಯು, ಆv್ಮÀರೂಪಮಾದ ಶಿವನೇ ಶಾರದೆಯು. ವಾಯುರೂಪಮಾದ ಬ್ರಹ್ಮನು ಆತ್ಮರೂಪಮಾದ ಶಾರದೆಯನ್ನು ಕೂಡಿಹನು. ಆಕಾಶರೂಪಮಾದ ವಿಷ್ಣುವು ವಾಯುರೂಪಮಾದ ಲಕ್ಷ್ಮಿಯಂ ಕೂಡಿಹನು. ಆತ್ಮÀರೂಪಮಾದ ಶಿವನು ಆಕಾಶರೂಪಮಾದ ಮಹಾದೇವಿಯಂ ಕೂಡಿಹನು. ಆತ್ಮನೇ ವಿವೇಕವೆಂದು ತಿಳಿವುದು, ವಿವೇಕವೇ ಸತ್ಯಜ್ಞಾನಾಂದಸ್ವರೂಪು, ವಿವೇಕದಿಂದ ಸಕಲಪ್ರಪಂಚವೆಲ್ಲಾ ಮಿಥ್ಯೆಯಾಗಿಹುದು. ಅಂತಪ್ಪ ಸಕಲಪ್ರಪಂಚಮೆಲ್ಲವೂ ಮಿಥ್ಯವೆಂದು ತಿಳಿದು ಆ ಪ್ರಪಂಚದಲ್ಲಿ ಹೊಂದಿರ್ಪ ವಿವೇಕವೇ ಮುಕ್ತಿಯು, ಆಮುಕ್ತಿಯೇ ಶಿವನು. ಅಂತಪ್ಪ ವಿವೇಕದಲ್ಲಿನಾಹಂಭಾವವಡಗಿ, ಅಂತಪ್ಪ ವಿವೇಕವೇ ಮಹಾಲಿಂಗವು, ಅಂತಪ್ಪ ವಿವೇಕಮಿರ್ದಲ್ಲಿ ಪಾಪಗಳು ಹೊಂದದೇ ಇಹವು. ಅದುಕಾರಣ, ತಾನು ತಾನಾಗಿರ್ಪ ನಿಜಾನಂದಸುಖದೊಳೋಲಾಡುತಿರ್ಪಂತೆ ಮಾಡಾ ಮಹಾಘನ ದೊಡ್ಡದೇಶಿಕಾರ್ಯಗುರುಪ್ರಭುವೆ.
--------------
ಮುಮ್ಮಡಿ ಕಾರ್ಯೇಂದ್ರ /ಮುಮ್ಮಡಿ ಕಾರ್ಯ ಕ್ಷಿತೀಂದ್ರ
ಗುರುವನರಿಯದ ಕಾರಣ ತನು ಸವೆಯಬೇಕೆಂಬರು. ಲಿಂಗವನರಿಯದ ಕಾರಣ ಮನ ಸವೆಯಬೇಕೆಂಬರು. ಜಂಗಮವನರಿಯದ ಕಾರಣ ಧನ ಸವೆಯಬೇಕೆಂಬರು. ಇಂತೀ ತ್ರಿವಿಧವನರಿಯದ ಕಾರಣ ಮಾಟಕೂಟಕ್ಕೆ ಮನೆಗಟ್ಟಿ ಮಾಡುತ್ತಿರ್ದರಯ್ಯಾ ಮಹಾಗಣಂಗಳು, ತಾವು ಸ್ವಇಚ್ಫಾಪರರಲ್ಲದೆ. ಬ್ರಹ್ಮನ ಹಂಗಿಂದ ಬಂದ ಗುರುವನರಿಯರಾಗಿ, ವಿಷ್ಣುವಿನ ಹಂಗಿಂದ ಬಂದ ಲಿಂಗವನರಿಯರಾಗಿ, ರುದ್ರನ ಹಂಗಿಂದ ಬಂದ ಜಂಗಮವನರಿಯರಾಗಿ, ಅಹಂಕಾರವ ಮರೆದಲ್ಲಿಯೆ ಗುರುವನರಿದವ, ಚಿತ್ತದ ಪ್ರಕೃತಿಯ ಹರಿದಲ್ಲಿಯೆ ಲಿಂಗವನರಿದವ, ಮಾಟಕೂಟದ ಅಲಸಿಕೆಯ ಮರೆದಾಗವೆ ಜಂಗಮವನರಿದವ. ಇಂತೀ ತ್ರಿವಿಧಸ್ಥಲನಿರತಂಗಲ್ಲದೆ ವರ್ಮವಿಲ್ಲಾ ಎಂದೆ. ಖ್ಯಾತಿ ಲಾಭಕ್ಕೆ ಮಾಡುವಾತನ ಭಕ್ತಿ, ಅಗ್ನಿಯಲ್ಲಿ ಬಿದ್ದ ಬಣ್ಣವನರಸುವಂತೆ, ನಿಃಕಳಂಕ ಮಲ್ಲಿಕಾರ್ಜುನಾ.
--------------
ಮೋಳಿಗೆ ಮಾರಯ್ಯ
ಅಗ್ನಿಯಲ್ಲಿ ಕಾಣಿಸುವ ಛಾಯೆಯು ನಿರಾಕಾರ ತಮೋರೂಪುಳ್ಳದ್ದು, ಜಲದಲ್ಲಿ ಕಾಣಿಸುವ ಛಾಯೆಯು ಸಾಕಾರಸತ್ವಸ್ವರೂಪುಳ್ಳದ್ದು. ಅಗ್ನಿಯಲ್ಲಿ ರೂಪುಮಾತ್ರವೇ, ಜಲದಲ್ಲಿ ರೂಪುರುಚಿಗಳೆರಡೂ ಪ್ರತ್ಯಕ್ಷಮಾಗಿಹವು. ಸಾಕಾರಛಾಯೆ ನಿಜಮಾಗಿ, ಹಾವಭಾವವಿಲಾಸವಿಭ್ರಮ ಕಾರಣಮಾಗಿಹುದು. ನಿರಾಕಾರಛಾಯೆ ಜಡಮಾಗಿ ವೈರಭಿನ್ನಮಾಗಿಹುದು. ಗುರುದತ್ತಲಿಂಗದಿಂದ ತನ್ನ ನಿಜಭಾವಮಂ ತಿಳಿದು, ಲಿಂಗವೂ ತಾನೂ ಏಕಮೆಂಬ ಭಾವವು ಬಲಿದು ಭಿನ್ನಭ್ರಮೆಯಳಿದು ಮನಂಗೊಂಡಿರ್ಪುದೇ ಲಿಂಗೈಕ್ಯ ಕಾಣಾ ಮಹಾಘನ ದೊಡ್ಡದೇಶಿಕಾರ್ಯಗುರುಪ್ರಭುವೆ.
--------------
ಮುಮ್ಮಡಿ ಕಾರ್ಯೇಂದ್ರ /ಮುಮ್ಮಡಿ ಕಾರ್ಯ ಕ್ಷಿತೀಂದ್ರ
ನಿಜಲಿಂಗೈಕ್ಯ ನಿಜಲಿಂಗೈಕ್ಯರೆಂದು ನುಡಿದುಕೊಂಬ ಕಡುಮಂದಮತಿಗಳನೇನೆಂಬೆನಯ್ಯಾ. ಸತ್ವ-ರಜ-ತಮ ಗಿರಿಯ ಗವಿಯ ಹೊಕ್ಕು ಗಬ್ಬುಗೊಂಡು ಗರಳಘಾತದೊಳು ಮುಳುಗಿದ ವಿಹಂಗಗತಿಗಳೆತ್ತಬಲ್ಲರಯ್ಯಾ ನಿಮ್ಮ ಶರಣನ ಲಿಂಗೈಕ್ಯದ ಘನವ ! ಪತಂಗ ಜಲದಲ್ಲಿ ಮುಳುಗಬಾರದು, ಅನಿಮಿಷನು ಅಗ್ನಿಯಲ್ಲಿ ಮುಳುಗಬಾರದು ಗುರುನಿರಂಜನ ಚನ್ನಬಸವಲಿಂಗ ನಿಮ್ಮ ನೀವೇ ಬಲ್ಲಿರಿ.
--------------
ದೇಶಿಕೇಂದ್ರ ಸಂಗನಬಸವಯ್ಯ
ಪಶು ಪಾಶ ಮಲ ಮಾಯಾಕರ್ಮಂಗಳು ನಿತ್ಯವೆಂಬೆ. ನಿತ್ಯವಾದಡೆ, `ಪಶುಪಾಶವಿನಿರ್ಮುಕ್ತಃ ಪರಮಾತ್ಮಾ ಸದಾಶಿವಃ ಎಂದುದಾಗಿ ಇದಂ ಮಲತ್ರಯದೋಷಂ ಗುರುಣೈವ ವಿಮೋಚನಂ' ಎಂದುದಾಗಿ, ಪಶು ಪಾಶ ಮಲ ಮಾಯಾಕರ್ಮಂಗಳು ಗುರೂಪದೇಶದಿಂದಲೂ ಶಿವಪ್ರಸಾದತ್ವದಿಂದಲೂ ಕೆಡುತ್ತಿರ್ದಾವು. ಪಶು ಪಾಶ ಮಲ ಮಾಯಾ ಕರ್ಮಂಗಳು ಶಿವಯೋಗಿಗಳ ಮಧ್ಯದಲ್ಲಿಯೂ ಕೆಡುತ್ತಿರ್ದಾವು; ಕೆಡುತ್ತಿರ್ದಂಥ ಅನಿತ್ಯವಾದ ವಸ್ತುವ, ಅಭ್ರಚ್ಛಾಯವ ನಿತ್ಯವೆನ್ನಬಹುದೇ? ನಿತ್ಯವೆಂಬೆಯಾದಡೆ, ಮಲಮಾಯಾಕರ್ಮಂಗಳು ಎಂದೂ ತೊಲಗುವುದಿಲ್ಲ ಎನ್ನು. ಮಲಮಾಯಾಕರ್ಮಂಗಳು ಎಂದೂ ತೊಲಗುವುದಿಲ್ಲ ಎಂಬಾಗವೇ ಮುಕ್ತಿಯಿಲ್ಲಯೆನ್ನು. ಮುಕ್ತಿಯುಂಟಾದಡೆ, ಮಲಮಾಯಾಕರ್ಮಂಗಳು ನಿತ್ಯವೆಂಬುದು ಅಬದ್ಧ. ಅವು ನಿತ್ಯವಾದಾಗವೆ, ಉತ್ಪತ್ತಿ ಸ್ಥಿತಿ ಪ್ರಳಯಂಗಳಿಲ್ಲಾಯೆನ್ನು. ಉತ್ಪತ್ತಿ ಸ್ಥಿತಿ ಪ್ರಳಯಂಗಳುಂಟಾದಲ್ಲಿ, ನಿತ್ಯವೆನಲಿಲ್ಲ. ಪೃಥ್ವಿಯ ಲಯ ಅಪ್ಪುವಿನಲ್ಲಿ, ಅಪ್ಪುವಿನ ಲಯ ಅಗ್ನಿಯಲ್ಲಿ, ಅಗ್ನಿಯ ಲಯ ವಾಯುವಿನಲ್ಲಿ, ವಾಯುವಿನ ಲಯ ಆಕಾಶದಲ್ಲಿ, ಆಕಾಶದ ಲಯ ಆತ್ಮನಲ್ಲಿ, ಆತ್ಮನ ಲಯ ಮಹಾಲಿಂಗದಲ್ಲಿ. ಇಂತಿವೆಲ್ಲವೂ ಮಹಾಲಿಂಗದಲ್ಲಿಯೇ ಹುಟ್ಟಿ, ಮಹಾಲಿಂಗದಲ್ಲಿಯೇ ಲಯವಾಗುವಲ್ಲಿಯೆ ಪಿಂಡಾಂಡವೆಲ್ಲವೂ ಲಯ. ಸಮಸ್ತ ತತ್ವಂಗಳೆಲ್ಲವೂ ಲಯ. ಈ ಲಯ ಗಮಂಗಳಿಗೆ ಆಸ್ಪದವಾದ ಶಿವತತ್ವವೊಂದೇ ನಿತ್ಯವಲ್ಲದೆ, ಉಳಿದವೆಲ್ಲವೊ ನಿತ್ಯವೆಂಬುದು ಹುಸಿ ಕಾಣಾ, ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.
--------------
ತೋಂಟದ ಸಿದ್ಧಲಿಂಗ ಶಿವಯೋಗಿಗಳು
ಅರಿವು ಮರವೆಯೆಂಬ ಉಭಯದ ಭೇದವ ತಿಳಿದಲ್ಲಿ, ಅಕ್ಷಿಯ ಮುಚ್ಚಿದಲ್ಲಿ ಬಯಲು, ಬಿಟ್ಟಲ್ಲಿ ಒಡಲುಗೊಂಡಿತ್ತು. ಉಭಯದೃಷ್ಟವೆಂಬುದು ಇಷ್ಟಲ್ಲದಿಲ್ಲ. ಇಷ್ಟವ ಹಿಡಿದಲ್ಲಿ ಕ್ರೀ, ಬಿಟ್ಟಲ್ಲಿ ಜ್ಞಾನವೆಂಬ ಕಟ್ಟಣೆವುಂಟೆ ? ಕಾಷ*ವ ಹಿಡಿದ ಅಗ್ನಿಗೆ, ಅಗ್ನಿಯಲ್ಲಿ ನಷ್ಟವಾದ ಕಾಷ*ಕ್ಕೆ, ಕೆಟ್ಟ ಮತ್ತೆ ಕೆಂಡವೆಂಬುದಿಲ್ಲ. ನಷ್ಟವಾದ ಮತ್ತೆ ಕಟ್ಟಿಗೆಯೆಂಬುದಿಲ್ಲ. ಕ್ರೀ ಭಾವ ಅಳವಟ್ಟು, ಭಾವ ಶೂನ್ಯವಾದಲ್ಲಿ ಕಾಮಧೂಮ ಧೂಳೇಶ್ವರ ತಾನೂ ತಾನೆ.
--------------
ಮಾದಾರ ಧೂಳಯ್ಯ
ಪಾದೋದಕ ಪ್ರಸಾದಗಳೆಂದೆಂಬಿರಿ, ಪಾದೋದಕ ಪ್ರಸಾದದ ಬಗೆಯ ಪೇಳ್ವೆ. ಗದ್ದುಗೆಯ ಮೇಲೆ ಗದ್ದುಗೆಯ ಹಾಕಿ, ಜಂಗಮಲಿಂಗಿಗಳ ಕರತಂದು ಕುಳ್ಳಿರಿಸಿ, ಧೂಪ ದೀಪ ಪತ್ರಿ ಪುಷ್ಪದಿಂದ ಪಾದಪೂಜೆಯ ಮಾಡಿ, ಕೆರೆ ಬಾವಿ ಹಳ್ಳ ಕೊಳ್ಳ ನದಿ ಮೊದಲಾದವುಗಳ ನೀರ ತಂದು- ಬ್ರಹ್ಮರಂಧ್ರದಲ್ಲಿರುವ ಸತ್ಯೋದಕವೆಂದು ಮನದಲ್ಲಿ ಭಾವಿಸಿ, ಆ ಜಂಗಮದ ಉಭಯಪಾದದ ಮೇಲೆರೆದು, ಪಾದೋದಕವೇ ಪರಮತೀರ್ಥವೆಂದು ಲಿಂಗ ಮುಂತಾಗಿ ಸೇವಿಸಿ, ನವಖಂಡಪೃಥ್ವಿಯಲ್ಲಿ ಬೆಳೆದ ಹದಿನೆಂಟು ಜೀನಸಿನ ಧಾನ್ಯವ ತಂದು, ಉದಕದಲ್ಲಿ ಹೆಸರಿಟ್ಟು, ಅಗ್ನಿಯಲ್ಲಿ ಪಾಕವಮಾಡಿ, ತಂದು ಜಂಗಮಕ್ಕೆ ಎಡೆಮಾಡಿ, ಜಂಗಮವು ತನ್ನ ಲಿಂಗಕ್ಕೆ ಅರ್ಪಿಸಿ ಸೇವಿಸಿದಬಳಿಕ ತಾವು ಪ್ರಸಾದವೇ ಪರಬ್ರಹ್ಮವೆಂದು ಭಾವಿಸಿ, ಕೊಂಡು ಸಲಿಸುವರಯ್ಯ. ಇಂತೀ ಕ್ರಮದಿಂದ ಕೊಂಬುದು ಪಾದೋದಕಪ್ರಸಾದವಲ್ಲ. ಇಂತೀ ಉಭಯದ ಹಂಗು ಹಿಂಗದೆ ಭವಹಿಂಗದು, ಮುಕ್ತಿದೋರದು. ಮತ್ತಂ, ಹಿಂದಕ್ಕೆ ಪೇಳಿದ ಕ್ರಮದಿಂದಾಚರಿಸಿ, ಗುರುಲಿಂಗಜಂಗಮದಲ್ಲಿ ಪಾದೋದಕ ಪ್ರಸಾದವ ಸೇವಿಸಬಲ್ಲವರಿಗೆ ಪ್ರಸಾದಿಗಳೆಂಬೆ. ಇಂತಪ್ಪವರಿಗೆ ಭವ ಹಿಂಗುವದು, ಮುಕ್ತಿಯೆಂಬುದು ಕರತಳಾಮಳಕವಾಗಿ ತೋರುವುದು. ಈ ಪಾದೋದಕದ ಭೇದವ ಬಸವಣ್ಣ ಚೆನ್ನಬಸವಣ್ಣ ಪ್ರಭುದೇವರು ಮುಖ್ಯವಾದ ಏಳುನೂರೆಪ್ಪತ್ತು ಪ್ರಮಥಗಣಂಗಳು ಬಲ್ಲರಲ್ಲದೆ ಮಿಕ್ಕಿನ ಜಡಮತಿ ಕಡುಪಾತಕರಾದ ಭಿನ್ನಭಾವ ಜೀವಾತ್ಮರೆತ್ತ ಬಲ್ಲರಯ್ಯ ಕಾಡನೊಳಗಾದ ಶಂಕರಪ್ರಿಯ ಚನ್ನ ಕದಂಬಲಿಂಗ ನಿರ್ಮಾಯಪ್ರಭುವೆ.
--------------
ಕಾಡಸಿದ್ಧೇಶ್ವರ
ಆಡಿನ ಶಿರದಮೇಲೆ ಕುಣಿದಾಡುವ ಕೋಡಗ ಮಾರುತನ ಕೂಡೆ ಉಡುವ ಹಡೆಯಿತ್ತು ನೋಡಾ. ಉಡುವಿನ ನಾಲಗೆಯಲ್ಲಿ ಅಜ ಹರಿ ಸುರ ಮನು ಮುನಿಗಳು ಅಡಗಿದರು. ಇವರೆಲ್ಲರ ಯಜನಾದಿಕೃತ್ಯಂಗಳು ಉಡುವಿನ ಕಾಲಿನಲ್ಲಿ ಅಡಗಿದವು. ತ್ರಿಜಗವೆಲ್ಲವು ಹೀಂಗೆ ಪ್ರಳಯದಲ್ಲಿ ಮುಳುಗಿದೆಯಲ್ಲ. ಉಡುವಿನ ನಾಲಗೆ ಕೊಯಿದು, ಕುಣಿದಾಡುವ ಕೋಡಗನ ಕಾಲಮುರಿದು, ಅಜಪಶುವ ಕೊಂದು, ಅಗ್ನಿಯಲ್ಲಿ ಸುಟ್ಟು ಭಸ್ಮವಮಾಡಬಲ್ಲಾತನ ಜನನಮರಣ ವಿರಹಿತನೆಂಬೆ, ತ್ರಿಜಗಾಧಿಪತಿಗಳಿಗೆ ಒಡೆಯನೆಂಬೆ, ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.
--------------
ತೋಂಟದ ಸಿದ್ಧಲಿಂಗ ಶಿವಯೋಗಿಗಳು
ಅಷ್ಟಮದ ಸಪ್ತವ್ಯಸನ ಷಡುವರ್ಗಂಗಳ ಒತ್ತಿ ನಿಲಿಸಿ, ಎಲ್ಲಕ್ಕೆ ಶಿವನೊಬ್ಬನೆ, ಶಿವಜ್ಞಾನವೆಂದರಿಯದ ವಿಪ್ರರು, ಆನೆ ಅಶ್ವ ಹೋತ ಕೋಣ ಬಿಂಜಣದಿಂದ ಕಡಿದು, ಬೆಂಕಿಯ ಮೇಲೆ ಹಾಕಿ, ತಾನು ಪರಬ್ರಹ್ಮನಾದೆನೆಂದು ನರಕಕ್ಕೆ ಹೋದರೊಂದುಕೋಟ್ಯಾನುಕೋಟಿ ಬ್ರಹ್ಮರು. ವೇದದ ಅರ್ಥವನರಿಯದೆ ಜೀವನ ಬಾಧೆಯಂ ಮಾಡುವ ವಧಾಸ್ವಕರ್ಮಕ್ಕೆ ಒಳಗಾದರು, ದ್ವಿಜರಂದು. ಆದಿಯ ಪ್ರಮಥರು ಕಂಡುದೆಂತೆಂದಡೆ: ಆನೆಯೆಂಬುದು ಮದ, ಮತ್ಸರವೆಂಬುದು ಅಶ್ವ, ಕೋಣನೆಂಬುದು ಕ್ರೋಧ, ಅಂಗವಿಕಾರವೆಂಬುದು ಹೋತ. ಇಂತು ನಾಲ್ಕು ವರ್ಗಂಗಳು. ಶಿವಜ್ಞಾನವೆಂಬ ಅಗ್ನಿಯಲ್ಲಿ ದಹನ ಮಾಡುವರು ನಮ್ಮವರು. ಇಂತೀ ವಿವರವಿಲ್ಲದೆ ತಾವು ಪರಬ್ರಹ್ಮರೆನಿಸಿಕೊಂಬ, ಜೀವಹಿಂಸೆಯ ಮಾಡುವ ವಿಪ್ರರ ಮುಖವ ನೋಡಲಾಗದೆಂದ ಕಲಿದೇವರದೇವ.
--------------
ಮಡಿವಾಳ ಮಾಚಿದೇವ
ಪೃಥ್ವಿಯಲ್ಲಿ ಅಪ್ಪು ಕೂಡಲಿಕ್ಕೆ ಅಗ್ನಿ ಕೂಡಿ ನಾಲ್ಕು ಭೇದವಾಗಿಪ್ಪುದು. ಆ ಅಗ್ನಿಯಲ್ಲಿ ವಾಯು ಕೂಡಿ ಏಳು ಭೇದವಾಗಿಪ್ಪುದು. ಆ ವಾಯುವಿನಲ್ಲಿ ಆಕಾಶ ಕೂಡಿ ಹದಿನಾರು ಭೇದವಾಗಿಪ್ಪುದು. ಇಂತೀ ಪೃಥ್ವಿಯ ಭೇದ, ಅಪ್ಪುವಿನ ಸರ್ವಸಾರ, ಅಗ್ನಿಗೆ ತನ್ಮಯ ಜಿಹ್ವೆ, ವಾಯುವಿಗೆ ಸರ್ವಗಂಧ, ಆಕಾಶಕ್ಕೆ ಆವರಣ ಅಲಕ್ಷ, ಇಂತೀ ಪಂಚೀಕರಣಂಗಳ ವಿಭಾಗಿಸಿ ಸೂತ್ರವಿಟ್ಟು ಒಂದರಿಂದ ಹಲವು ಲೆಕ್ಕವ ಸಂದಣಿಸುವಂತೆ, ಲೆಕ್ಕವ ಹಲವ ಕಂಡು ಒಂದರಿಂದ ವಿಭಾಗಿಸಿದರೆಂಬುದನರಿದು ತಾಯ ಗರ್ಭದ ಶಿಶು ಭಿನ್ನವಾದಂತೆ ಸುಖದುಃಖವ ವಿಚಾರಿಸಬೇಕು. ಸದ್ಯೋಜಾತಲಿಂಗವೆಂದರಿವನ್ನಕ್ಕ ಉಭಯವ ವಿಚಾರಿಸಬೇಕು
--------------
ಅವಸರದ ರೇಕಣ್ಣ
ಹೊರಗೊಳಗೆ ನಾನು ನೀನಾದ ಬಳಿಕ ಪೃಥ್ವಿಯಲ್ಲಿ ಭಾವಶುದ್ಧವಾಯಿತ್ತು, ಅಪ್ಪುವಿನಲ್ಲಿ ಮನಶುದ್ಧವಾಯಿತ್ತು, ಅಗ್ನಿಯಲ್ಲಿ ಚಿತ್ತಶುದ್ಧವಾಯಿತ್ತು, ವಾಯುವಿನಲ್ಲಿ ಪ್ರಾಣಶುದ್ಧವಾಯಿತ್ತು, ಆಕಾಶದಲ್ಲಿ ಜ್ಞಾನಶುದ್ಧವಾಯಿತ್ತು, ಆತ್ಮನಲ್ಲಿ ಅರಿವು ಶುದ್ಧವಾಯಿತ್ತು. ಇದು ಕಾರಣ ಶುದ್ಧಸಿದ್ಧಪ್ರಸಿದ್ಧ ಪ್ರಭುವಿನಲ್ಲಿ ಭಕ್ತಿ ಶುದ್ಧವಾಯಿತ್ತು.
--------------
ದೇಶಿಕೇಂದ್ರ ಸಂಗನಬಸವಯ್ಯ
ಪೃಥ್ವಿಯ ಬೀಜ ಅಪ್ಪುವ ಕೂಡಿ, ಅಗ್ನಿಯಲ್ಲಿ ಮೊಳೆದೋರಿತ್ತು. ವಾಯುವಿನಲ್ಲಿ ಶಾಖೆದೋರಿ, ಆಕಾಶದಲ್ಲಿ ಪಲ್ಲವಿಸಿತ್ತು. ಮಹದಾಕಾಶದಲ್ಲಿ ಫಲದೋರಿ, ಶೂನ್ಯದಲ್ಲಿ ಹಣ್ಣಾಯಿತ್ತು. ಅದು ನಿರಾಳದಲ್ಲಿ ರಸತುಂಬಿ, ನಿರ್ವಯಲಲ್ಲಿ ತೊಟ್ಟು ಬಿಟ್ಟಿತ್ತು. ಆ ಹಣ್ಣ ಪ್ರಭುದೇವರಾರೋಗಿಸಿದರಾಗಿ ನಿರ್ವಯಲಾದರು. ಆ ಪ್ರಭುದೇವರಾರೋಗಿಸಿ ಮಿಕ್ಕ ಪ್ರಸಾದವ ಬಸವಣ್ಣ ಮೊದಲಾದಸಂಖ್ಯಾತ ಮಹಾಗಣಂಗಳು ಸ್ವೀಕರಿಸಿದರಾಗಿ ಶಿವನೊಳಗಾದರು. ನಾನು ಮಹಾಗಣಂಗಳ ಪ್ರಸಾದವನಾರೋಗಿಸಿದೆನಾಗಿ ನಿಜಗುರು ಸ್ವತಂತ್ರಸಿದ್ಧಲಿಂಗೇಶ್ವರನು, ತನ್ನೊಳಗೆನ್ನನಿಂಬಿಟ್ಟುಕೊಂಡನು.
--------------
ಸ್ವತಂತ್ರ ಸಿದ್ಧಲಿಂಗ
ಘಟಕುಂಭದಲ್ಲಿ ಜೀವನೆಂಬ ಜೇಗಟೆ ಬಂದಿತ್ತು. ದೃಷ್ಟವ ಇಷ್ಟದಲ್ಲಿ ಕುಟ್ಟಲಾಗಿ, ಮೊಳೆ ಮುರಿದು ಒಡಲೊಡೆಯಿತ್ತು. ಅಂಗದ ಅಗ್ನಿಯಲ್ಲಿ ಬೇಯಿಸಿ, ಮೂರುಸಂಗವಡೆದ ಮಡಕೆಯ ಓಡಿನಲ್ಲಿ ಶ್ರುತ ದೃಷ್ಟ ಅನುಮಾನವೆಂಬ ಕೋಲಿನಲ್ಲಿ ಕಡೆಯಲಾಗಿ, ರಸ ಒಳಗಾಗಿ ಹಿಪ್ಪಿ ಹೊರಗಾಯಿತ್ತು, ಆ ಸುಧೆಯ ತುಂಬಿ ತಂದೆ. ಒಮ್ಮೆಗೆ ಕೊಂಡಲ್ಲಿ ಬ್ರಹ್ಮಕಲ್ಪವ ಕೆಡಿಸಿತ್ತು. ಮತ್ತೊಮ್ಮೆ ಕೊಂಡಲ್ಲಿ ವಿಷ್ಣುವಿನ ಗೊತ್ತ ಕಿತ್ತಿತ್ತು. ಮೂರೆಂದು ಮೊದಲ ಹಾಗವ ಮೀರಿದ ರುದ್ರನ ಅಗಡವ ಕಿತ್ತಿತ್ತು. ಅರೆದು ಕೊಂಡಲ್ಲಿ ಸುಧೆ, ಮರೆದು ಕೊಂಡಲ್ಲಿ ಸುರೆಯಾಗಿ, ಅರುಹಿರಿಯರ ಮರವೆಯ ಮಾಡಿತ್ತು. ನಾ ತಂದ ಬೆವಹಾರವ ಅಹವರೆಲ್ಲರೂ ಕೊಳ್ಳಿ, ಧಮೇಶ್ವರಲಿಂಗವನರಿಯಬಲ್ಲಡೆ.
--------------
ಹೆಂಡದ ಮಾರಯ್ಯ
ಅಷ್ಟತನುಮೂರ್ತಿ ಶಿವನೆಂಬ ಕಷ್ಟಜೀವಿಗಳನೇನೆಂಬೆನಯ್ಯಾ? ಯುಗಜುಗಂಗಳು ಪ್ರಳಯವಹಲ್ಲಿ ಧರೆ ಜಲದಲ್ಲಿ ಅಡಗಿತ್ತು, ಜಲ ಅಗ್ನಿಯಲ್ಲಿ ಅಡಗಿತ್ತು, ಅಗ್ನಿ ವಾಯುವಿನಲ್ಲಿ ಅಡಗಿತ್ತು, ವಾಯು ಆಕಾಶದಲ್ಲಿ ಅಡಗಿತ್ತು, ಆಕಾಶ ಅತೀತನಲ್ಲಿ ಅಡಗಿತ್ತು, ಅತೀತ ಆದಿಯೊಳಗಡಗಿತ್ತು, ಆದಿ ಅನಾದಿಯೊಳಡಗಿತ್ತು, ಅನಾದಿ ನಿಜದೊಳಡಗಿತ್ತು. ಇಂತೀ ಅಷ್ಟತನು ಒಂದರೊಳಗೊಂದಳಿವಲ್ಲಿ, ಒಂದರೊಳಗೊಂದು ಹುಟ್ಟುವಲ್ಲಿ, ಎಂದಳಿದನೆಂದು, ಹುಟ್ಟಿದನೆಂದು ಬಲ್ಲವರುಂಟೆ? ಹುಟ್ಟಿದನಳಿದವನೆಂಬ ಶಬ್ದವ ನುಡಿಯಲಾಗದು. ಇದು ಕಾರಣ, ನಮ್ಮ ಮಹಾಘನ ಸೋಮೇಶ್ವರನು ಮಾಡಿದಡಾದವು, ಬೇಡಾ ಎಂದಡೆ ಮಾದವು.
--------------
ಅಜಗಣ್ಣ ತಂದೆ
ಇನ್ನಷ್ಟು ... -->