ಅಥವಾ

ಒಟ್ಟು 18 ಕಡೆಗಳಲ್ಲಿ , 4 ವಚನಕಾರರು , 15 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಭಕ್ತನಲ್ಲಿಯ ಪ್ರಸಾದಿಗೆ ಪೃಥ್ವಿಯಲ್ಲಿಯ ಅಗ್ನಿಯೇ ಅಂಗ. ಆ ಅಂಗಕ್ಕೆ ಸುಚಿತ್ತದಲ್ಲಿಯ ನಿರಹಂಕಾರವೇ ಹಸ್ತ, ಆ ಹಸ್ತಕ್ಕೆ ಆಚಾರಲಿಂಗದಲ್ಲಿಯ ಶಿವಲಿಂಗವೇ ಲಿಂಗ. ಆ ಶಿವಲಿಂಗಮುಖದಲ್ಲಿ ಚಿಗುರು ಮೊದಲಾದ ಪತ್ರೆಯ ಗಂಧದ್ರವ್ಯಮಂ ಸಮರ್ಪಣವ ಮಾಡಿ ತೃಪ್ತಿಯನೆ ಭೋಗಿಸುವನು ನೋಡಾ ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಆ ಐಕ್ಯನಲ್ಲಿಯ ಪ್ರಸಾದಿಗೆ ಆತ್ಮನಲ್ಲಿಯ ಅಗ್ನಿಯೇ ಅಂಗ. ಆ ಅಂಗಕ್ಕೆ ಭಾವದಲ್ಲಿಯ ನಿರಹಂಕಾರವೇ ಹಸ್ತ. ಆ ಹಸ್ತಕ್ಕೆ ಮಹಾಲಿಂಗದಲ್ಲಿಯ ಶಿವಲಿಂಗವೇ ಲಿಂಗ. ಆ ಶಿವಲಿಂಗದ ಮುಖದಲ್ಲಿ ರೂಪತೃಪ್ತಿದ್ರವ್ಯವನು ಸಮರ್ಪಣವಂ ಮಾಡಿ, ತೃಪ್ತಿಪ್ರಸಾದವನೆ ಭೋಗಿಸುವನು ನೋಡಾ ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಪೃಥಿವ್ಯಪ್ತೇಜೋವಾಯ್ವಾಕಾಶಂಗಳಲ್ಲಿ ಪೃಥಿವ್ಯಪ್ತೇಜಸ್ಸುಗಳು ಸಾಕರಾಗಳೂ ವಾಯ್ವಾಕಾಶಂಗಳು ನಿರಾಕಾರಗಳೂ ಆಗಿ, ಸ್ಥೂಲ ಸೂಕ್ಷ್ಮಕಾರಣಂಗಳಾಗಿಹವು. ಪೃಥ್ವಿಯಲ್ಲೈದು ಗುಣಗಳೂ ಜಲದಲ್ಲಿ ನಾಲ್ಕು ಗುಣಗಳೂ ಅಗ್ನಿಯಲ್ಲಿ ಮೂರು ಗುಣಗಳೂ ವಾಯುವಿನಲ್ಲಿರಡು ಗುಣಗಳೂ ಇರ್ಪವು. ಆಕಾಶದಲ್ಲೊಂದು ಗುಣವಿರ್ಪುದು. ಆತ್ಮನು ನಿರ್ಗುಣಮಾಗಿ ಸಕಲಗುಣಂಗಳಿಗೂ ತಾನು ಕಾರಣಮಾಗಿಹನು. ಅದೆಂತೆಂದೊಡೆ : ನಿರ್ಗುಣಮಾದ ಬಿಂದುಪದಾರ್ಥವು ಸಗುಣರೂಪಮಾದ ಮನುಷ್ಯರಿಗೆ ತಾನು ಕಾರಣಮಾಗಿರ್ಪಂದದಿ ಆತ್ಮನಿಹನು. ಪಂಚವರ್ಣಂಗಳು ಸತ್ವರಜಸ್ತಮೋಗುಣಂಗಳು. ನಾದ ಬಿಂದು ಕಲೆಗಳು ಬಾಲ್ಯ ಯೌವನ ಕೌಮಾರ ವಾರ್ಧಕ್ಯಂಗಳು. ಇವೆಲ್ಲವೂ ಪ್ರಪಂಚಕ್ಕೆ ಗುಣಂಗಳಲ್ಲದೆ ಆತ್ಮನ ಗುಣವಲ್ಲ. ಅಂತಪ್ಪ ಆತ್ಮನೇ ಶಿವನು, ಆಕಾಶವೇ ವಿಷ್ಣು, ವಾಯುವೇ ಬ್ರಹ್ಮನು. ಸಾಕಾರದಲ್ಲಿ ಅಗ್ನಿಯೇ ರುದ್ರನು, ಜಲವೇ ವಿಷ್ಣು. ಪೃಥ್ವಿಯೇ ಬ್ರಹ್ಮನು. ಇವು ಒಂದಕ್ಕೊಂದು ಸೃಷ್ಟಿ ಸ್ಥಿತಿ ಸಂಹಾರಹೇತುಗಳಾಗಿ, ಎಲ್ಲವೂ ಆತ್ಮನಲ್ಲಿ ಲಯವನೈದುತ್ತಿಹವು. ಅಂತಪ್ಪ ಆತ್ಮಸ್ವರೂಪಮೆತೆಂದೊಡೆ : ದೃಷ್ಟಿಗೋಚರಮಲ್ಲ, ಒಂದು ವಸ್ತುವಿನಲ್ಲಿ ಸಾಮ್ಯಗೋಚರಮಲ್ಲ. ಅದೆಂತೆಂದೊಡೆ : ವಾಯ್ವಾಕಾಶಾತ್ಮಸ್ವರೂಪಿಗಳಾದ ತ್ರಿಮೂರ್ತಿಗಳು. ವಾಯುರೂಪಮಾದ ಬ್ರಹ್ಮನೇ ಲಕ್ಷ್ಮಿಯು, ಆಕಾಶರೂಪಮಾದ ವಿಷ್ಣುವೇ ಮಹಾದೇವಿಯು, ಆv್ಮÀರೂಪಮಾದ ಶಿವನೇ ಶಾರದೆಯು. ವಾಯುರೂಪಮಾದ ಬ್ರಹ್ಮನು ಆತ್ಮರೂಪಮಾದ ಶಾರದೆಯನ್ನು ಕೂಡಿಹನು. ಆಕಾಶರೂಪಮಾದ ವಿಷ್ಣುವು ವಾಯುರೂಪಮಾದ ಲಕ್ಷ್ಮಿಯಂ ಕೂಡಿಹನು. ಆತ್ಮÀರೂಪಮಾದ ಶಿವನು ಆಕಾಶರೂಪಮಾದ ಮಹಾದೇವಿಯಂ ಕೂಡಿಹನು. ಆತ್ಮನೇ ವಿವೇಕವೆಂದು ತಿಳಿವುದು, ವಿವೇಕವೇ ಸತ್ಯಜ್ಞಾನಾಂದಸ್ವರೂಪು, ವಿವೇಕದಿಂದ ಸಕಲಪ್ರಪಂಚವೆಲ್ಲಾ ಮಿಥ್ಯೆಯಾಗಿಹುದು. ಅಂತಪ್ಪ ಸಕಲಪ್ರಪಂಚಮೆಲ್ಲವೂ ಮಿಥ್ಯವೆಂದು ತಿಳಿದು ಆ ಪ್ರಪಂಚದಲ್ಲಿ ಹೊಂದಿರ್ಪ ವಿವೇಕವೇ ಮುಕ್ತಿಯು, ಆಮುಕ್ತಿಯೇ ಶಿವನು. ಅಂತಪ್ಪ ವಿವೇಕದಲ್ಲಿನಾಹಂಭಾವವಡಗಿ, ಅಂತಪ್ಪ ವಿವೇಕವೇ ಮಹಾಲಿಂಗವು, ಅಂತಪ್ಪ ವಿವೇಕಮಿರ್ದಲ್ಲಿ ಪಾಪಗಳು ಹೊಂದದೇ ಇಹವು. ಅದುಕಾರಣ, ತಾನು ತಾನಾಗಿರ್ಪ ನಿಜಾನಂದಸುಖದೊಳೋಲಾಡುತಿರ್ಪಂತೆ ಮಾಡಾ ಮಹಾಘನ ದೊಡ್ಡದೇಶಿಕಾರ್ಯಗುರುಪ್ರಭುವೆ.
--------------
ಮುಮ್ಮಡಿ ಕಾರ್ಯೇಂದ್ರ /ಮುಮ್ಮಡಿ ಕಾರ್ಯ ಕ್ಷಿತೀಂದ್ರ
ಆ ಮಾಹೇಶ್ವರನಲ್ಲಿಯ ಪ್ರಸಾದಿಗೆ ಅಪ್ಪುವಿನಲ್ಲಿಯ ಅಗ್ನಿಯೇ ಅಂಗ. ಆ ಅಂಗಕ್ಕೆ ಸುಬುದ್ಧಿಯಲ್ಲಿಯ ನಿರಹಂಕಾರವೆ ಹಸ್ತ. ಆ ಹಸ್ತಕ್ಕೆ ಗುರುಲಿಂಗದಲ್ಲಿಯ ಶಿವಲಿಂಗವೆ ಲಿಂಗ. ಆ ಶಿವಲಿಂಗಮುಖದಲ್ಲಿ ಖಾರವಾದ ರುಚಿಯ ದ್ರವ್ಯವನು ಸಮರ್ಪಣವಂ ಮಾಡಿ ತೃಪ್ತಿಯನೆ ಭೋಗಿಸುವನು ನೋಡಾ ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಪೃಥ್ವಿಯೇ ಶೂದ್ರನು, ಜಲವೇ ವೈಶ್ಯನು, ಅಗ್ನಿಯೇ ಕ್ಷತ್ರಿಯನು, ವಾಯುವೇ ಬ್ರಾಹ್ಮಣನು. ಸ್ಥೂಲಶರೀರವೇ ಶೂದ್ರನು, ಸೂಕ್ಷ್ಮಶರೀರವೇ ವೈಶ್ಯನು, ಕಾರಣಶರೀವೇ ಕ್ಷತ್ರಿಯನು, ಜೀವನೇ ಬ್ರಾಹ್ಮಣನು. ಬ್ರಾಹ್ಮಣರಿಗೆ ಋಗ್ವೇದವು, ಕ್ಷತ್ರಿಯರಿಗೆ ಯಜುರ್ವೇದವು, ವೈಶ್ಯರಿಗೆ ಸಾಮವೇದವು, ಶೂದ್ರರಿಗೆ ಅಥರ್ವಣವೇದವು. ಶೂದ್ರರಿಗೆ ಧರ್ಮವು, ವೈಶ್ಯರಿಗೆ ಅರ್ಥವು, ಕ್ಷತ್ರಿಯರಿಗೆ ಕಾಮವು, ಬ್ರಾಹ್ಮಣರಿಗೆ ಮೋಕ್ಷವು, ಬ್ರಾಹಣರಿಗೆ ಪೀತವರ್ಣವು, ಕ್ಷತ್ರಿಯರಿಗೆ ಅರುಣವರ್ಣವು, ವೈಶ್ಯರಿಗೆ ಶ್ಯಾಮವರ್ಣವು, ಶೂದ್ರರಿಗೆ ನೀಲವರ್ಣವು. ಬ್ರಾಹ್ಮಣರಿಗೆ ಸಾಮವು, ಕ್ಷತ್ರಿಯರಿಗೆ ಭೇದವು, ವೈಶ್ಯರಿಗೆ ದಾನವು, ಶೂದ್ರರಿಗೆ ದಂಡವು, ಬ್ರಾಹ್ಮಣರಿಗೆ ಇಂದ್ರನಧಿದೇವತೆಯು, ಕ್ಷತ್ರಿಯರಿಗೆ ಕಾಲನಧಿದೇವತೆಯು, ಶೂದ್ರರು ಭಕ್ತರನ್ನೂ, ವೈಶ್ಯರು ಗುರುವನ್ನೂ, ಕ್ಷತ್ರಿಯರು ಲಿಂಗವನ್ನೂ, ಬ್ರಾಹ್ಮಣರು ಅತಿಥಿಗಳನ್ನೂ ಪೂಜಿಸಬೇಕು. ಶಿವಭಕ್ತನೇ ಬ್ರಾಹ್ಮಣನು, ವಿಷ್ಣುಭಕ್ತನೇ ಕ್ಷತ್ರಿಯನು, ನಿಜವಸ್ತುವು ಉತ್ಕøಷ್ಟತ್ವವಂ ಹೊಂದಿದಲ್ಲಿ ಶ್ರೇಷ*ವಪ್ಪುದು; ಉತ್ಕøಷ್ಟ ವಸ್ತುವು ನಿಜವಂ ಹೊಂದಿದಲ್ಲಿ ಅದೇ ಪರತತ್ವವು. ಇಂತಪ್ಪ ಜಾತಿಧರ್ಮಂಗಳನ್ನು ತನ್ನಲ್ಲಿ ತಾನೇ ತಿಳಿದು ಭಕ್ತನಾಗಿ, ಶೂದ್ರತ್ವಮಂ ಕಳೆದು ಮಾಹೇಶ್ವರನಾಗಿ, ವೈಶ್ಯತ್ವಮಂ ಕಳೆದು ಪ್ರಸಾದಿಯಾದಿ, ಕ್ಷತ್ರಿಯತ್ವಮಂ ಕಳೆದು ಪ್ರಾಣಲಿಂಗಿಯಾಗಿ, ಬ್ರಹ್ಮತ್ವಮಂ ಪಡೆದು ಅಜಾತಮಾಗಿ, ಆಕಾಶರೂಪಮಾಗಿ, ಶುದ್ಧಸ್ಫಟಿಕಸಂಕಾಶಮಪ್ಪ. ಪ್ರಸಾದಲಿಂಗದಲ್ಲಿ ಪರಿಣಾಮಿಸುತ್ತಾ. ಲಿಂಗವೇ ಪತಿ ತಾನೇ ಸತಿಯಾಗಿರ್ಪನೇ ಶರಣನು. ಈ ಸತಿಪತಿನ್ಯಾವಳಿದು ವರ್ಣಾತೀತನೂ ವಾಗತೀತನೂ ಆಗಿ, ತಾನುತಾನಾಗಿರ್ಪುದೇ ಐಕ್ಯವು. ಇಂತಪ್ಪ ಕೇವಲನಿರ್ವಾಣಲಿಂಗೈಕ್ಯಪದವೆನಗೆ ಸಾಧ್ಯಮಪ್ಪಂತೆ ಮಾಡಾ ಮಹಾಘನ ದೊಡ್ಡದೇಶಿಕಾರ್ಯಗುರುಪ್ರಭುವೆ.
--------------
ಮುಮ್ಮಡಿ ಕಾರ್ಯೇಂದ್ರ /ಮುಮ್ಮಡಿ ಕಾರ್ಯ ಕ್ಷಿತೀಂದ್ರ
ದಕ್ಷಿಣದಲ್ಲಿರ್ಪ ಯಮನೇ ವಿಷ್ಣುವು; ಉತ್ತರದಲ್ಲಿರ್ಪ ಕುಬೇರನೇ ಲಕ್ಷ್ಮಿಯು. ಪಶ್ಚಿಮದಲ್ಲಿರ್ಪ ವರುಣನೇ ವಿಷ್ಣುವು; ಪೂರ್ವದಲ್ಲಿರ್ಪ ಇಂದ್ರನೇ ಲಕ್ಷ್ಮಿಯು. ಈಶಾನ್ಯದಲ್ಲಿರ್ಪ ಈಶಾನನೇ ಶಿವನು; ನೈರುತ್ಯದಲ್ಲಿರ್ಪ ನೈರುತಿಯೇ ಶಕ್ತಿಯು. ಅಗ್ನೇಯಲ್ಲಿರ್ಪ ಅಗ್ನಿಯೇ ಶಿವನು; ವಾಯುವ್ಯದಲ್ಲಿರ್ಪ ವಾಯುವೇ ಶಕ್ತಿಯು. ಇವು ನಿಜನಾಮಸಂಬಂಧಗಳಾಗಿಹವು. ಅವು ಭಿನ್ನನಾಮಸಂಬಂಧಗಳಾಗಿ ಸಾಕಾರ ನಿರಾಕಾರಮೂರ್ತಿಗಳಾಗಿಹವು. ಶಿವನು ಸಾಕಾರದಲ್ಲಿ ಸಂಹರಿಸಿ, ನಿರಾಕಾರದಲ್ಲಿ ರಕ್ಷಿಸುತ್ತಿಹನು. ವಿಷ್ಣವು ಸಾಕಾರದಲ್ಲಿ ರಕ್ಷಿಸಿ, ನಿರಾಕಾರದಲ್ಲಿ ಸಂಹರಿಸುತ್ತಿಹನು. ಕೆಳಗೆ, ಬಿಂದುಮುಖದಲ್ಲಿ ಸೃಷ್ಟಿಸುವನೇ ಬ್ರಹ್ಮನು, ಮೇಲೆ, ನಾದ ಮುಖದಲ್ಲಿ ಸೃಷ್ಟಿಸುತ್ತಿರ್ಪಳೇ ಸರಸ್ವತಿಯು. ಅಷ್ಟದಳಕಮಲದ ಮೂಲವೇ ಬ್ರಹ್ಮನು, ಅದರಗ್ರದಲ್ಲಿ ತೋರುವ ವಾಸನೆಯು ಸರಸ್ವತಿಯು. ಆ ಕಮಲದ ಹೃದಯವೇ ಮೇರುವು, ಆ ಮೇರುಮಧ್ಯದಲ್ಲಿರ್ಪುದೇ ಮಹಾಲಿಂಗವು. ಅಲ್ಲಿರ್ಪ ಮಹಾಲಿಂಗವಂ ಗುರುವು ಬಾಹ್ಯಕ್ಕೆ ತಂದಿದಿರಿಟ್ಟಲ್ಲಿ, ಸ್ಫಟಿಕಭಾಂಡದಲ್ಲೊಳಗಿರ್ಪ ವಸ್ತುವೇ ಹೊರಗೆ, ಹೊರಗಿರ್ಪ ವಸ್ತುವೇ ಒಳಗೆ ತೋರಿ, ಆ ಭಾಂಡವು ತನ್ನ ನಿಜಗುಣವನಳಿದು ವಸ್ತುವು ಗುಣರೂಪಮಾಗಿ ತೋರ್ಪಂದದಿ, ಇಷ್ಟ ಪ್ರಾಣಗಳೇಕಮಾದಲ್ಲಿ, ಶರೀರವು ತನ್ನ ಮುನ್ನಿನ ಗುಣವನಳಿದು, ಅಗ್ನಿಸ್ವರೂಪಮಾದಿಷ್ಟಲಿಂಗದಲ್ಲಿ ಐಕ್ಯವಾದುದರಿಂ ದಹನಕ್ಕಯೋಗ್ಯಮಾಯಿತ್ತು. ನಿರಾಕಾರವಾದ ಪ್ರಾಣವು ಈಶಾನ್ಯಸ್ವರೂಪಮಾದ ಪ್ರಾಣಲಿಂಗದಲ್ಲಿ ಲೀನಮಾದುದರಿಂ ಕರ್ಮಸಂಸ್ಕಾರಯೋಗ್ಯಮಲ್ಲಮಾಯಿತ್ತು. ಆದುದರಿಂದಾ ಶಿವಭಕ್ತನಿಗೆ ದಹನಸಂಸ್ಕಾರಮಿಲ್ಲಮಾಯಿತ್ತು. ಇಂತಪ್ಪ ಸಾಕಾರ ನಿರಾಕಾರ ಶಿವಶಕ್ತಿಸ್ವರೂಪಗಳೆಲ್ಲವೂ ಭಾವದಲ್ಲೊಂದೇ ಆಗಿ ಪರಿಪೂರ್ಣತೃಪ್ತಿಯಲ್ಲಿ ನಿಜಸ್ವಭಾವನಾಯಿತ್ತು ಕಾಣಾ ಮಹಾಘನ ದೊಡ್ಡದೇಶಿಕಾರ್ಯಗುರುಪ್ರಭುವೆ.
--------------
ಮುಮ್ಮಡಿ ಕಾರ್ಯೇಂದ್ರ /ಮುಮ್ಮಡಿ ಕಾರ್ಯ ಕ್ಷಿತೀಂದ್ರ
ಇಂದ್ರಿಯಸ್ವರೂಪಮಾದ ತನುವೇ ಜಾಗ್ರವು, ವಿಷಯಸ್ವರೂಪಮಾದ ಮನವೇ ಸ್ವಪ್ನವು, ಅನುಭವಸ್ವರೂಪಮಾದ ಜೀವನಲ್ಲಿ ಸುಷುಪ್ತಿಯು. ಪಾಪವೆಂಬ ಪಂಕದಲ್ಲಿ ಹುಟ್ಟಿ ಆಸೆಯೆಂಬ ಬಿಸದೊಳಗೆ ಕೂಡಿ ಅಷ್ಟಭೂತಂಗಳೆಂಬಷ್ಟದಳಂಗಳಿಂ ಚಿತ್ತವೆಂಬ ಮೇರುವಿನಿಂ ಯುಕುತಮಾಗಿರ್ಪ ಹೃತ್ಕಮಲದಲ್ಲಿ ಜೀವನು ಸುಷುಪ್ತಿಯಂ ಹೊಂದಿ, ತನುವಿನ ಜಾಗ್ರವು ಮನದ ಸ್ವಪ್ನವಲ್ಲದೆ, ತನ್ನ ನಿಜವೆಲ್ಲವೂ ಸುಷುಪ್ತಿಯಂ ಹೊಂದಿ ತನು ಸೋಂಕಿದಲ್ಲಿ ತಿಳುವುತ್ತಂ, ಮರಳಿ ನಿದ್ರಾರೂಪದಿಂ ಮರವುತ್ತಲಿರ್ಪ ಜೀವನ ಪರಿಯ ನೋಡಾ. ಇಂತು ಭವಭವಂಗಳಲ್ಲಿ ತೊಳಲುವ ಜೀವಂಗೆ ಗುರುಸಂಸ್ಕಾರದಿ ಲಿಂಗವೆಂಬ ಪೂರ್ವಾಚಲದಲ್ಲಿ ಜ್ಞಾನಾರ್ಕೋದಯಮಾಗಿ, ಭಾವವೆಂಬ ಮೋಹ ಬಯಲಲ್ಲಿ ಗಮಿಸುತ್ತಿರಲು, ಹೃತ್ಕಮಲಂ ವಿಕಸಿತಮಾಗಿ ಆನಂದಮಕರಂದದೊಡನೆ ಕೂಡಿ, ಗುರುಮಂತ್ರಮಲಯಾನಿಲನು ನಿಜವಾಸನೆವಿಡಿದು ಬೀಸುತ್ತಿರಲು, ಜೀವ ಸುಷುಪ್ತಿಭ್ರಾಂತಿಯಳಿದು, ಪರಮಜಾಗ್ರತ್ಸ್ವರೂಪನಪ್ಪ ಪರಮಾತ್ಮನಾಗಿ, ತನುವಿನ ಜಾಗ್ರ, ಮನದ ಸ್ವಪ್ನಗಳಳಿದು, ಪರಮನ ಮಧ್ಯಾವಸ್ಥೆಯಲ್ಲಿ ಲೀನಮಾಗಲು, ಅಷ್ಟಭೂತಂಗಳುಂ ಅಷ್ಟಾವರಣಂಗಳಾದವದೆಂತೆಂದೊಡೆ : ಪೃಥ್ವಿಯೇ ಭಸ್ಮವು, ಜಲವೇ ಪಾದೋದಕವು, ಅಗ್ನಿಯೇ ರುದ್ರಾಕ್ಷವು, ವಾಯುವೇ ಪ್ರಸಾದವು, ಆಕಾಶವೇ ಮಂತ್ರವು, ಅಹಂಕಾರವೇ ಲಿಂಗವು, ಮಹವೇ ಗುರುವು, ಚಿತ್ತವೇ ಜಂಗಮವು, ನಿಜವು ಪ್ರಸನ್ನಮಾಗಿ ಮನವೇ ವೃಷಭೇಶ್ವರನಾಗಿ ತನುವೇ ಕೈಲಾಸಪರ್ವತಮಾಗಿ ಸಕಲ ಗುಣಂಗಳೇ ಶಿವಗಣಂಗಳಾಗಿ; ಸಕಲಜನ್ಮಕರ್ಮಪ್ರಪಂಚಪರದೊಳಡಗಿತ್ತೆಂತೆಂದೊಡೆ ಕಾಲದಲ್ಲಿ ಬ್ರಹ್ಮಾಂಡಂಗಳಡಗಿ ರೂಪುದೋರದಿರ್ಪಂತೆ, ಚಿದಾಕಾಶದಲ್ಲಿ ಲೀನಮಾಗೆ, ತಾನೇ ಶಿವನಾಗಿ, ಅಭೇದ ಬ್ರಹ್ಮವಾಯಿತ್ತೆಂತೆಂದೊಡೆ : ವಸ್ತುಸ್ವರೂಪಮಾದ ಸುವರ್ಣವ ಕಾಸಿ, ಕರಗಿಸಿ ; ಉಳಿದ ನಿಜಮಂ ತೆಗೆದು, ಬೆಳುಗಾರ ಮಿಕ್ಕಿ, ಮಹದೊಳಗೆ ಬೆರಸಿ, ಎರಡನ್ನೂ ಒಂದುಮಾಡಿ, ತಾನದರೊಳಗೆ ಬೆರೆದು ಭೇದದೋರದಿರ್ಪಂತೆ, ಮನಸ್ಸು ಜೀವ ಪರಮರನೊಂದುಮಾಡಿ, ತಾನದರೊಳಗೆ ಬೆರೆದು, ಭೇದದೋರದಿರ್ಪುದೆ ಲಿಂಗೈಕ್ಯ ಕಾಣಾ. ಮಹಾಘನ ದೊಡ್ಡದೇಶಿಕಾರ್ಯಗುರುಪ್ರಭುವೆ.
--------------
ಮುಮ್ಮಡಿ ಕಾರ್ಯೇಂದ್ರ /ಮುಮ್ಮಡಿ ಕಾರ್ಯ ಕ್ಷಿತೀಂದ್ರ
ಪೃಥ್ವಿಯೇ ಸ್ಥಾವರ, ಜಲವೇ ಜಂಗಮ, ಅಗ್ನಿಯೇ ಸ್ಥಾವರ, ವಾಯುವೇ ಜಂಗಮ. ಆಕಾಶವೇ ಸ್ಥಾವರ, ಜೀವನೇ ಜಂಗಮ. ಪೃಥ್ವಿಯೇ ಸ್ಥೂಲ, ಜಲವೇ ಸೂಕ್ಷ್ಮ. ಅಗ್ನಿಯೇ ಸ್ಥೂಲ, ವಾಯುವೇ ಸೂಕ್ಷ್ಮ ಆಕಾಶವೇ ಸ್ಥೂಲ, ಆತ್ಮನೇ ಸೂಕ್ಷ್ಮ. ಸ್ಥೂಲವಸ್ತುಗಳಿಂದ ಸೂಕ್ಷ್ಮ ವಸ್ತುಗಳೇ ಪ್ರಾಣಮಾಗಿಹವು. ತತ್ಸಂಗಂಗಳಿಂ ಬಿಂದುಕಳಾನಾದಗಳು ಸೃಷ್ಟಿಯಾಗುತ್ತಿಹವು. ಸ್ಥೂಲವಸ್ತುಗಳು ಆ ಸೂಕ್ಷ್ಮವಸ್ತುಗಳಲ್ಲೇ ಸೃಷ್ಟಿ ಸ್ಥಿತಿ ಸಂಹಾರಂಗಳಂ ಹೊಂದುತ್ತಿಹವು. ಪೃಥಿವ್ಯಾದಿ ಪಂಚಭೂತಂಗಳೇ ಘ್ರಾಣಾದಿ ಪಂಚೇಂದ್ರಿಯಂಗಳಾಗಿ, ಆಯಾ ಗುಣಂಗಳಂ ಗ್ರಹಿಸುವಂತೆ ಆತ್ಮನಿಗೆ ಮನಸ್ಸೇ ಇಂದ್ರಿಯಮಾಗಿ, ಆತ್ಮನ ಗುಣವಂ ತಾನೇ ಗ್ರಹಿಸುತ್ತಿರ್ಪುದು. ಪರಮಾತ್ಮನಿಗೆ ಭಾವೇಂದ್ರಿಯಮಾಗಿ, ಆ ಪರಮನ ಗುಣವಂ ತಾನೇ ಗ್ರಹಿಸುತ್ತಿರ್ಪುದು. ಮುಖಂಗಳಾವುವೆಂದೊಡೆ: ಘ್ರಾಣಕ್ಕೇ ವಾಯುವೇ ಮುಖ, ಜಿಹ್ವೆಗೆ ಅಗ್ನಿಯೇ ಮುಖ, ನೇತ್ರಕ್ಕೆ ಜಲವೇ ಮುಖ, ತ್ವಕ್ಕಿಗೆ ಪೃಥ್ವಿಯೇ ಮುಖ, ಶ್ರೋತ್ರಕ್ಕಾತ್ಮವೇ ಮುಖ, ಮನಸ್ಸಿಗೆ ಚಿದಾಕಾಶವೆ ಮುಖ, ಭಾವಕ್ಕೆ ನಿಜವೇ ಮುಖವಾದಲ್ಲಿ. ಪಂಚೇದ್ರಿಯಂಗಳು ಪಂಚಭೂತಗುಣಂಗಳಂ ಗ್ರಹಿಸುವಂತೆ, ಮನಸ್ಸು ಆತ್ಮಗುಣವನ್ನು ಜ್ಞಾನಮುಖದಿಂ ಗ್ರಹಿಸಿ, ಗುರುದತ್ತಲಿಂಗವೂ ಆತ್ಮನೂ ಏಕಮೆಂದು ತಿಳಿದು, ತೂರ್ಯಭಾವದಲ್ಲಿ ಸ್ವಭಾವಮಾಗಿ, ನಿಜಾನಂದ ತೂರ್ಯಾತೀತದಲ್ಲಿ ಎರಕವೆರದಿರ್ಪುದೇ ಲಿಂಗೈಕ್ಯ ಕಾಣಾ ಮಹಾಘನ ದೊಡ್ಡದೇಶಿಕಾರ್ಯಗುರುಪ್ರಭುವೆ.
--------------
ಮುಮ್ಮಡಿ ಕಾರ್ಯೇಂದ್ರ /ಮುಮ್ಮಡಿ ಕಾರ್ಯ ಕ್ಷಿತೀಂದ್ರ
ಆ ಶರಣನಲ್ಲಿಯ ಪ್ರಸಾದಿಗೆ ಆಕಾಶದಲ್ಲಿಯ ಅಗ್ನಿಯೇ ಅಂಗ. ಆ ಅಂಗಕ್ಕೆ ಸುಜ್ಞಾನದಲ್ಲಿಯ ನಿರಹಂಕಾರವೇ ಹಸ್ತ. ಆ ಹಸ್ತಕ್ಕೆ ಪ್ರಸಾದಲಿಂಗದಲ್ಲಿಯ ಶಿವಲಿಂಗವೇ ಲಿಂಗ. ಆ ಶಿವಲಿಂಗದ ಮುಖದಲ್ಲಿ ಕುರುಹುವಿಡಿದು ಹುಟ್ಟಿದ ಶಬ್ದದ್ರವ್ಯವನು ಸಮರ್ಪಣವಂ ಮಾಡಿ, ತೃಪ್ತಿಯನೆ ಭೋಗಿಸುವನು ನೋಡಾ ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಪ್ರಸಾದವ ಕೊಂಡ ಶರಣನ ಸರ್ವಾಂಗವೆಲ್ಲ ಪ್ರಸಾದವು. ಪ್ರಸಾದವೆ ಕೋಟಿಲಿಂಗವೆಂದರಿವುದು. ಪ್ರಸಾದಮೂರ್ತಿಯಾದ ಶರಣನ ರೋಮ ರೋಮಂಗಳು ಕೋಟಿಲಿಂಗವೆಂದುಚ್ಚರಿಸುವರಲ್ಲಾ ! ಘ್ರಾಣಮುಖ ನಾಸಿಕ ಆಚಾರಲಿಂಗವಾಗಿ, ಗಂಧದ್ರವ್ಯವ ಗ್ರಹಿಸಿ ಗಂಧವಾದ ಪ್ರಸಾದವೆ ಬಿಂದು, ಸರ್ವಾಂಗಮಯವಾದ ಮಹೇಶ್ವರನ ಷಡುರಸವ ಭುಂಜಿಸುವ ಜಿಹ್ವೆಯೆ ಗುರುಲಿಂಗ. ಷಡಕ್ಷರಿಮಂತ್ರನಾದ ಪ್ರಸಾದಿ, ಅಗ್ನಿಯೇ ಚರ್ಮ ಸ್ವರ ಸರ್ವಾಂಗಮೂರ್ತಿ ಶಿವಲಿಂಗ. ದೃಶ್ಯಾದೃಶ್ಯ ದೃಕ್ಕು ಜಾತಿ ಜ್ಯೋತಿಸ್ವರೂಪು ತಾನಾದ ಪ್ರಸಾದಿ. ಸ್ಥಾವರ ಜಂಗಮ ಪ್ರಣಮಸ್ವರೂಪು ತ್ವಕ್ಕು ಸರ್ವಾಂಗ ಸ್ಪರ್ಶನ ಜಂಗಮಲಿಂಗನಾದ ಪ್ರಸಾದಿ. ಆಕಾಶ, ಘಟಾಕಾಶ, ಮಠಾಕಾಶ, ಬಿಂದ್ವಾಕಾಶ, ಚಿದಾಕಾಶ, ವ್ಯೋಮಾಕಾಶ ಗೋತ್ರ ಸಹಲಿಂಗನಾದ ಪ್ರಸಾದಿ. ಜೀವಾತ್ಮ ಅಂತರಾತ್ಮ ಪರಮಾತ್ಮ ಸರ್ವೇಂದ್ರಿಯ ತೃಪ್ತಿಯಾದ ಮಹಾಲಿಂಗನಾದ ಪ್ರಸಾದಮೂರ್ತಿ ನಿಮ್ಮ ಶರಣ ಚೆನ್ನಯ್ಯಪ್ರಿಯ ನಿರ್ಮಾಯಪ್ರಭುವೆ.
--------------
ಚೆನ್ನಯ್ಯ
ಪೃಥ್ವೀಚಕ್ರಕ್ಕೆ ಶರೀರವೇ ಪೂರ್ವ, ಶರೀರದೊಳಗಣ ಪೃಥ್ವಿಯೇ ಪಶ್ಚಿಮ, ಜಿಹ್ವೆಯಲ್ಲಿ ಕೊಂಬ ಆಹಾರಾದಿಪೃಥ್ವಿಯೇ ಉತ್ತರ, ಅಧೋಮುಖದಲ್ಲಿ ವಿಸರ್ಜನರೂಪಮಾದ ಪುತ್ರಾದಿಪೃಥ್ವಿಯೇ ದಕ್ಷಿಣ, ಪೂರ್ವರೂಪವಾದ ಶರೀರಕ್ಕೂ ದಕ್ಷಿಣರೂಪವಾದ ಪುತ್ರಾದಿಗಳಿಗೂ ಸಂಧಿಕಾಲಮಾಗಿರ್ಪ ಅರ್ಥಾದಿಪೃಥ್ವಿಯೇ ಆಗ್ನೇಯ, ಪುತ್ರಾದಿ ದಕ್ಷಿಣಪೃಥ್ವಿಗೂ ಧಾತುರೂಪಮಾದ ಅಂತಃಪಶ್ಚಿಮಪೃಥ್ವಿಗೂ ಸಂಧಿಕಾಲಮಾಗಿರ್ಪ ಮಲವಿಸರ್ಜನರೂಪಮಾದ ಪೃಥ್ವಿಯೇ ನೈರುತ್ಯ, ಆ ಶರೀರದೊಳಗಣ ಪೃಥ್ವಿಗೂ ಆಹಾರರೂಪವಾದ ಜಿಹ್ವೆಯಲ್ಲಿರ್ಪ ಉತ್ತರಪೃಥ್ವಿಗೂ ಸಂಧಿಕಾಲದಲ್ಲಿ ಪರಮಪವಿತ್ರಮಾಗಿ ಪರಿಪಕ್ವಮಯವಾಗಿ ಪ್ರಸಾದರೂಪವಾದ ಅನ್ನಾದಿ ಭೋಜನಕ್ರಿಯೆಯೆಂಬ ಪೃಥ್ವಿಯೇ ಈಶಾನ್ಯ. ಜಲಚಕ್ರಕ್ಕೆ ಗುಹ್ಯಜಲವೇ ಪೂರ್ವ, ಶರೀರಜಲವೇ ದಕ್ಷಿಣ, ಜಿಹ್ವಾಜಲವೇ ಪಶ್ಚಿಮ, ನೇತ್ರಜಲವೇ ಉತ್ತರ, ಗುಹ್ಯದಲ್ಲಿರ್ಪ ಪೂರ್ವಜಲಕ್ಕೂ ಶರೀರದಲ್ಲಿರ್ಪ ದಕ್ಷಿಣಜಲಕ್ಕೂ ಸಂಧಿಕಾಲದಲ್ಲಿರ್ಪ ಬಿಂದುಜಲವೇ ಆಗ್ನೇಯ, ಶರೀರದಲ್ಲಿರ್ಪ ದಕ್ಷಿಣಜಲಕ್ಕೂ ಜಿಹ್ವೆಯಲ್ಲಿರ್ಪ ಪಶ್ಚಿಮಜಲಕ್ಕೂ ಸಂಧಿಯಲ್ಲಿರ್ಪ ವಾತ ಪಿತ್ತ ಶ್ಲೇಷ್ಮಜಲವೇ ನೈರುತ್ಯ, ಜಿಹ್ವೆಯಲ್ಲಿರ್ಪ ಪಶ್ಚಿಮಜಲಕ್ಕೂ ನೇತ್ರದಲ್ಲಿರ್ಪ ಉತ್ತರಜಲಕ್ಕೂ ಸಂಧಿಯಲ್ಲಿರ್ಪ ಉಚ್ಛ್ವಾಸವಾಯುಮುಖದಲ್ಲಿ ದ್ರವಿಸುತ್ತಿರ್ಪ ಜಲವೇ ವಾಯವ್ಯಜಲ, ನೇತ್ರದಲ್ಲಿರ್ಪ ಜಲಕ್ಕೂ ಗುಹ್ಯದಲ್ಲಿರ್ಪ ಜಲಕ್ಕೂ ಸಂಧಿಯಲ್ಲಿ ಮನೋಮುಖದಲ್ಲಿ ದ್ರವಿಸುತ್ತಿರ್ಪ ಮೋಹಜಲವೇ ಈಶಾನ್ಯಜಲ. ಅಗ್ನಿಚಕ್ರಕ್ಕೆ ಗುಹ್ಯದಲಿರ್ಪ ತೇಜೊರೂಪಮಾದ ಆಗ್ನಿಯೇ ಪೂರ್ವ, ಉದರದಲ್ಲಿರ್ಪ ಅಗ್ನಿಯೇ ದಕ್ಷಿಣ, ನೇತ್ರದಲ್ಲಿರ್ಪ ಆಗ್ನಿಯೇ ಪಶ್ಚಿಮ, ಹಸ್ತದಲ್ಪಿರ್ಪ ಸಂಹಾರಾಗ್ನಿಯೇ ಉತ್ತರ, ಗುಹ್ಯದಲ್ಲಿರ್ಪ ಪೂರ್ವಾಗ್ನಿಗೂ ಉದರದಲ್ಲಿರ್ಪ ದಕ್ಷಿಣಾಗ್ನಿಗೂ ಸಂಧಿಯಲ್ಲಿ ಬೀಜಸ್ಥಾನದಲ್ಲಿರ್ಪ ಕಾಮಾಗ್ನಿಯೇ ಆಗ್ನೇಯಾಗ್ನಿ, ಉದರದಲ್ಲಿರ್ಪ ಅಗ್ನಿಗೂ ನೇತ್ರದಲ್ಲಿರ್ಪ ಪಶ್ಚಿಮಾಗ್ನಿಗೂ ಸಂಧಿಯಲ್ಲಿರ್ಪ ಕ್ರೋಧ ಮತ್ಸರ ರೂಪವಾಗಿರ್ಪ ತಾಮಸಾಗ್ನಿಯೇ ನೈರುತ್ಯಾಗ್ನಿ, ನೇತ್ರದಲ್ಲಿರ್ಪ ಅಗ್ನಿಗೂ ಹಸ್ತದಲ್ಲಿರ್ಪ ಉತ್ತರಾಗ್ನಿಗೂ ಸಂಧಿಯಲ್ಲಿ ವಸ್ತುಗ್ರಹಣಚಲನೋದ್ರೇಕಾಗ್ನಿಯೇ ವಾಯವ್ಯಾಗ್ನಿ, ಆ ಹಸ್ತಕ್ಕೂ ಗುಹ್ಯಕ್ಕೂ ಸಂಧಿಯಲ್ಲಿ ಧರ್ಮಪ್ರಜಾಸೃಷ್ಟಿನಿಮಿತ್ತ ಪಾಣಿಗ್ರಹಣಮಪ್ಪಲ್ಲಿ ಸಾಕ್ಷಿರೂಪಮಾದ ಹೋಮಾಗ್ನಿಯೇ ಈಶಾನ್ಯಾಗ್ನಿ. ವಾಯುಚಕ್ರಕ್ಕೆ ನಾಸಿಕಚಕ್ರದಲ್ಲಿರ್ಪ ಪ್ರಾಣವಾಯುವೇ ಪೂರ್ವವಾಯು, ಹೃದಯವೇ ಪಶ್ಚಿಮ, ಚಲನಾತ್ಮಕವಾದ ಚೈತನ್ಯವಾಯುಮುಖವಿಕಸನವೇ ಉತ್ತರವಾಯು, ಗಂಧವಿಸರ್ಜನೆಯೇ ದಕ್ಷಿಣವಾಯು, ನಾಸಿಕದಲ್ಲಿರ್ಪ ಪೂರ್ವವಾಯುವಿಗೂ ಗಂಧದಲ್ಲಿರ್ಪ ದಕ್ಷಿಣವಾಯುವಿಗೂ ಸಂಧಿಯಲ್ಲಿರ್ಪ ಗಂಧವಾಯುವೇ ಆಗ್ನೇಯವಾಯು, ಗುದದಲ್ಲಿರ್ಪ ವಾಯುವಿಗೂ ಹೃದಯದಲ್ಲಿರ್ಪ ಪಶ್ಚಿಮವಾಯುವಿಗೂ ಸಂಧಿಯಲ್ಲಿ ಆದ್ಯನಾದಿವ್ಯಾಧಿಗಳಂ ಕಲ್ಪಿಸಿ ದೀಪನಾಗ್ನಿಯಲ್ಲಿ ಕೂಡಿಸಿ ಅನಂತಮಲವಂ ಮಾಡಿ ಅಧೋಮುಖದಲ್ಲಿ ಕೆಡವುತ್ತಿರ್ಪ ತಾಮಸವಾಯುವೇ ನೈರುತ್ಯವಾಯು, ಹೃದಯವಾಯುವಿಗೂ ವದನದಲ್ಲಿರ್ಪ ಉತ್ತರವಾಯುವಿಗೂ ಸಂಧಿಯಲ್ಲಿರ್ಪ ಕಂಠದಲ್ಲಿ ಹಸನ ರೋದನ ಗರ್ಜನಾದಿಗಳಂ ಮಾಡುತ್ತಿರ್ಪ ವಾಯುವೇ ವಾಯವ್ಯವಾಯು, ವದನದಲ್ಲಿರ್ಪ ವಾಯುವಿಗೂ ನಾಸಿಕದಲ್ಲಿರ್ಪ ವಾಯುವಿಗೂ ಸಂಧಿಯಲ್ಲಿರ್ಪ ಅಕ್ಷರಾತ್ಮಕವಾಯುವೇ ಈಶಾನ್ಯ. ಆಕಾಶಚಕ್ರಕ್ಕೆ ಶ್ರೋತ್ರದಲ್ಲಿರ್ಪ ಆಕಾಶವೇ ಪೂರ್ವ, ಶರೀರದಲ್ಲಿರ್ಪ ಆಕಾಶವೇ ಪಶ್ಚಿಮ, ಪಾದದಲ್ಲಿರ್ಪ ಆಕಾಶವೇ ದಕ್ಷಿಣ, ಜಿಹ್ವೆಯಲ್ಲಿರ್ಪ ಆಕಾಶವೇ ಉತ್ತರ, ಶ್ರೋತ್ರದಲ್ಲಿರ್ಪ ಪೂರ್ವಾಕಾಶಕ್ಕೂ ಪಾದದಲ್ಲಿರ್ಪ ದಕ್ಷಿಣಾಕಾಶಕ್ಕೂ ಕಿವಿಯಲ್ಲಿ ಪಾದದಲ್ಲಿ ಗಮಿಸುತ್ತಿರ್ಪಲ್ಲಿ ಮುಂದೆ ಗಮಿಸುತ್ತಿರ್ಪಾಕಾಶವೇ ಆಗ್ನೇಯಾಕಾಶ, ಪಾದದಲ್ಲಿರ್ಪ ಆಕಾಶಕ್ಕೂ ಶರೀರದಲ್ಲಿರ್ಪ ಪಶ್ಚಿಮಾಕಾಶಕ್ಕೂ ಸಂಧಿಯಲ್ಲಿ ಮಲಮೂತ್ರ ವಿಸರ್ಜನಾಕಾಶವೇ ನೈರುತ್ಯಾಕಾಶ, ಆ ಶರೀರದೊಳಗಿರ್ಪ ಆಕಾಶಕ್ಕೂ ಜಿಹ್ವೆಯಲ್ಲಿರ್ಪ ಉತ್ತರಾಕಾಶಕ್ಕೂ ಸಂಧಿಯಲ್ಲಿ ಗುಣಗ್ರಹಣವಂ ಮಾಡುತ್ತಿರ್ಪ ಹೃದಯವೇ ವಾಯವ್ಯಾಕಾಶ, ಜಿಹ್ವೆಯಲ್ಲಿರ್ಪ ಆಕಾಶಕ್ಕೂ ಶ್ರೋತ್ರದಲ್ಲಿರ್ಪ ಆಕಾಶಕ್ಕೂ ಸಂಧಿಯಲ್ಲಿ ಗುರುವು ಮುಖದಿಂದುಪದೇಶಿಸಲು, ಶಿಷ್ಯನು ಕರ್ಣಮುಖದಲ್ಲಿ ಗ್ರಹಿಸಲು, ತನ್ಮಂತ್ರಮಧ್ಯದಲ್ಲಿ ಪ್ರಕಾಶಿಸುತ್ತಿರ್ಪ ಆಕಾಶವೇ ಈಶಾನ್ಯಾಕಾಶ, ಆತ್ಮಚಕ್ರಕ್ಕೆ ವಾಸನಾಜ್ಞಾನವೇ ಪಶ್ಚಿಮ, ರುಚಿಜ್ಞಾನವೇ ಉತ್ತರ, ಸ್ಪರ್ಶಜ್ಞಾನವೇ ಪೂರ್ವ, ರೂಪಜ್ಞಾನವೇ ದಕ್ಷಿಣ. ಸ್ಪರ್ಶನರೂಪಮಾದ ಪೂರ್ವಜ್ಞಾನವೇ ಜೀವನು, ರೂಪಜ್ಞತ್ವಮುಳ್ಳ ದಕ್ಷಿಣಜ್ಞಾನವೇ ಶರೀರ. ಸ್ಪರ್ಶನದಲ್ಲಿ ಜೀವನು ವ್ಯಾಪ್ತನಾದಂತೆ ರೂಪಜ್ಞಾನದಲ್ಲಿ ಶರೀರವು ವ್ಯಾಪ್ತಮಾಗಿರ್ಪುದರಿಂ ರೂಪಜ್ಞಾನತ್ವವೇ ಶರೀರ, ಸ್ಪರ್ಶನಜ್ಞಾನತ್ವವೇ ಜೀವ. ತತ್ಸಂಧಿಯಲ್ಲಿ ತೇಜೋವಾಯುರೂಪಮಾಗಿರ್ಪ ಮನೋಜ್ಞಾನತ್ವವೇ ಆಗ್ನೇಯಾತ್ಮನು. ಮನೋಜ್ಞಾನಕ್ಕೂ ಪಶ್ಚಿಮದಲ್ಲಿರ್ಪ ವಾಸನಾಜ್ಞಾನಕ್ಕೂ ಸಂಧಿಯಲ್ಲಿ ಜನ್ಮಾಂತರವಾಸನಾಜ್ಞಾನವೇ ಪರೋಕ್ಷಜ್ಞಾನ, ರೂಪಜ್ಞಾನವೇ ಪ್ರತ್ಯಕ್ಷಜ್ಞಾನ. ಈ ಎರಡರ ಮಧ್ಯದಲ್ಲಿ ಭಾವಜ್ಞತ್ವಮಿರ್ಪುದು. ಜಾಗ್ರತ್ಸ್ವಪ್ನಗಳ ಮಧ್ಯದಲ್ಲಿ ಸುಷುಪ್ತಿಯು ಇರ್ಪಂತೆ ಸುಷುಪ್ತಿಗೆ ತನ್ನಲ್ಲಿರ್ಪ ಸ್ವಪ್ನವೇ ಪ್ರತ್ಯಕ್ಷಮಾಗಿ ತನಗೆ ಬಾಹ್ಯಮಾಗಿರ್ಪ ಜಾಗ್ರವು ಪ್ರತ್ಯಕ್ಷಮಾಗಿಹುದು. ಅಂತು ಭಾವಜ್ಞತ್ವಕ್ಕೆ ರೂಪಜ್ಞಾನಪ್ರತ್ಯಕ್ಷಮಾಗಿ ವಾಸನಾಜ್ಞಾನಕ್ಕೆ ತಾನೇ ಮರೆಯಾಗಿರ್ಪುದರಿಂ ಆ ಭಾವಜ್ಞಾನವೇ ನೈರುತ್ಯಾತ್ಮನು. ಆ ವಾಸನಾಜ್ಞಾನಕ್ಕೂ ಉತ್ತರದಲ್ಲಿರ್ಪ ರುಚಿಜ್ಞಾನಕ್ಕೂ ಸಂಧಿಯಲ್ಲಿ ರುಚಿಯೆಂದರೆ ಅನುಭವಪದಾರ್ಥ, ತಜ್ಞಾನವೇ ರುಚಿಜ್ಞಾನ. ವಾಸನಾಜ್ಞಾನವೇ ಪರೋಕ್ಷಜ್ಞಾನ, ಅದೇ ಭೂತಜ್ಞಾನ, ಆ ರುಚಿಜ್ಞಾನವೇ ಭವಿಷ್ಯಜ್ಞಾನ. ಅಂತಪ್ಪ ಭೂತಭವಿಷ್ಯತ್ತುಗಳ ಮಧ್ಯದಲ್ಲಿ ವಾಯುರೂಪಮಾದ ಶಬ್ದಮುಖದಲ್ಲಿ ತಿಳಿವುತ್ತಿರ್ಪ ಶಬ್ದಜ್ಞಾನವೇ ವಾಯವ್ಯಾತ್ಮನು. ರುಚಿಜ್ಞಾನಕ್ಕೂ ಸ್ಪರ್ಶನಜ್ಞಾನಕ್ಕೂ ಮಧ್ಯದಲ್ಲಿ ಜೀವನು ರುಚಿಗಳನನುಭವಿಸುವ ಸಂಧಿಯಲ್ಲಿರ್ಪ ಶಿವಜ್ಞಾನಮಧ್ಯದಲ್ಲಿರುವನೇ ಈಶಾನ್ಯಾತ್ಮನು. ಜ್ಞಾನಾನಂದಮೂರ್ತಿಯೇ ಕರಕಮಲದಲ್ಲಿ ಇಷ್ಟಲಿಂಗಮಾಗಿ, ಆ ಶಿವಜ್ಞಾನವೇ ಹೃತ್ಕಮಲಮಧ್ಯದಲ್ಲಿ ರುಚ್ಯನುಭವಸಂಧಿಯಲ್ಲಿ ಪ್ರಾಣಲಿಂಗಮಾಗಿ, ಪ್ರತ್ಯಕ್ಷ ಪರೋಕ್ಷಂಗಳಿಗೆ ತಾನೇ ಕಾರಣವಾಗಿ, ಆ ಶಿವಜ್ಞಾನಂಗಳು ಭಾವದಲ್ಲೊಂದೇ ಆಗಿ ಪ್ರಕಾಶಿಸಿದಲ್ಲಿ ಭಾವದಲ್ಲಿರ್ಪ ತಾಮಸವಳಿದು, ಪ್ರತ್ಯಕ್ಷ ಪರೋಕ್ಷಂಗಳೊಂದೇ ಆಗಿ, ಪರೋಕ್ಷಜ್ಞಾನದಲ್ಲಿ ಪ್ರತ್ಯಕ್ಷಭಾವಂಗಳಳಿದು, ಭೂತಭವಿಷ್ಯಂಗಳೊಂದೇ ಆಗಿ ಅಖಂಡಮಯಮಾಗಿ ಎಲ್ಲವೂ ಒಂದೆಯಾಗಿರ್ಪುದೇ ಆಗ್ನೇಯ. ಅದಕ್ಕೆ ಇಷ್ಟಪ್ರಾಣಂಗಳೆಂಬೆರಡು ದಳಂಗಳು. ವಿಶುದ್ಧದಲ್ಲಿ ಪ್ರಮಾಣಕ್ಕೆ ಪೂರ್ವಾತ್ಮನಾದ ಜೀವನೇ ಸ್ಥಾನ, ಸಂಶಯಕ್ಕೆ ಆಗ್ನೇಯಾತ್ಮವಾದ ಮನವೇ ಸ್ಥಾನ, ದೃಷ್ಟಾಂತಕ್ಕೆ ದಕ್ಷಿಣಾತ್ಮಕವಾದ ಶರೀರವೇ ಸ್ಥಾನ, ಅವಯವಕ್ಕೆ ನೈರುತ್ಯವಾದ ಭಾವವೇ ಸ್ಥಾನ, ನಿರ್ಣಯಕ್ಕೆ ಪಶ್ಚಿಮಾತ್ಮಕವಾದ ಶಬ್ದಜ್ಞಾನವೇ ಸ್ಥಾನ, ಜಲ್ಪಕ್ಕೆ ವಾಯುವ್ಯಾತ್ಮವಾದ ಶಬ್ದಜ್ಞಾನವೇ ಸ್ಥಾನ, ಹೇತ್ವಭಾವಕ್ಕೆ ರುಚಿಜ್ಞತ್ವವೇ ಸ್ಥಾನ. ಜಾತಿಯೆಂದರೆ ಪದಾರ್ಥನಿಷ*ಧರ್ಮ. ಆ ಧರ್ಮಕ್ಕೆ ಈಶಾನ್ಯಾತ್ಮನಾದ ಶಿವನೇ ಸ್ಥಾನ, ಪ್ರಮೇಯಕ್ಕೆ ಶ್ರೋತ್ರದಲ್ಲಿರ್ಪ ವಿಶುದ್ಧರೂಪಮಾದ ಪೂರ್ವಾಕಾಶವೇ ಸ್ಥಾನ, ಪ್ರಯೋಜನಕ್ಕೆ ಧಾವತೀರೂಪಮಾದ ಆಗ್ನೇಯಾಕಾಶವೇ ಸ್ಥಾನ, ಸಿದ್ಧಾಂತಕ್ಕೆ ಪದದಲ್ಲಿರ್ಪ ದಕ್ಷಿಣಾಕಾಶವೇ ಸ್ಥಾನ, ತರ್ಕಕ್ಕೆ ಮಲವಿಸರ್ಜನರೂಪವಾದ ನೈರುತ್ಯಾಕಾಶವೇ ಸ್ಥಾನ, ಛಲಕ್ಕೆ ಜಿಹ್ವೆಯಲ್ಲಿ ವಾಗ್ರೂಪಮಾಗಿರ್ಪ ಉತ್ತರಾಕಾಶವೇ ಸ್ಥಾನ, ನಿಗ್ರಹಕ್ಕೆ ಉಪದೇಶಮಧ್ಯದಲ್ಲಿರ್ಪ ಈಶಾನ್ಯಾಕಾಶವೇ ಸ್ಥಾನ. ಇಂತು ಆತ್ಮಾಕಾಶಮಾಗಿರ್ಪ ಷೋಡಶದಳಂಗಳಿಂ ಪ್ರಕಾಶಿಸುತ್ತಿರ್ಪುದೇ ವಿಶುದ್ಧಿಚಕ್ರವು. ತದ್ಬೀಜಮಾಗಿರ್ಪ ಷೋಡಶಸ್ವರಂಗಳಲ್ಲಿ ಹ್ರಸ್ವಸ್ವರಂಗಳೆಲ್ಲವೂ ಆತ್ಮಚಕ್ರಬೀಜ ದೀರ್ಘಸ್ವರಂಗಳೆಲ್ಲವೂ ಆಕಾಶಚಕ್ರಬೀಜ, ಮುಕುಳನವೇ ಹ್ರಸ್ವ ; ಅದು ಆತ್ಮರೂಪಮಾದ ಸಂಹಾರಮಯಮಾಗಿಹುದು. ವಿಕಸನವೇ ದೀರ್ಘ; ಅದು ಮಿಥ್ಯಾರೂಪಮಾದ ಸೃಷ್ಟಿಮಯಮಾಗಿಹುದು. ಇಂತಪ್ಪ ಆತ್ಮಾಕಾಶಚಕ್ರಗಳೆರಡೂ ಏಕಾಕಾರಮಾಗಿರ್ಪುದೇ ವಿಶುದ್ಧಿಚಕ್ರವು. ಅನಾಹತದಲ್ಲಿ ತನುವಿಗೆ ಪೂರ್ವರೂಪಮಾದ ವಾಯುವೇ ಸ್ಥಾನ, ನಿಧನಕ್ಕೆ ವಾಸನಾಗ್ರಹಣರೂಪಮಾದ ಆಗ್ನೇಯವಾಯುವೇ ಸ್ಥಾನ, ಸಹಜವೆಂದರೆ ಪ್ರಕೃತಿ, ಆ ಸಹಜಕ್ಕೆ ದಕ್ಷಿಣರೂಪಮಾದ ವಿಸರ್ಜನವಾಯುವೇ ಸ್ಥಾನ, ಸೂಹೃತಿಗೆ ನೈರುತ್ಯರೂಪಮಾದ ಗರ್ಭವಾಯುವೇ ಸ್ಥಾನ, ಸುತಕ್ಕೆ ಪಶ್ಚಿಮದಲ್ಲಿರ್ಪ ಹೃದಯವಾಯುವೇ ಸ್ಥಾನ, ರಿಪುವಿಗೆ ಕಂಠದಲ್ಲಿ ವಾಯವ್ಯರೂಪಮಾಗಿರ್ಪ ಉತ್ಕøಷ್ಟಘೋಷವಾಯುವೇ ಸ್ಥಾನ, ಜಾಯಕ್ಕೆ ಉತ್ತರದಲ್ಲಿರ್ಪ ಜಿಹ್ವಾಚಲನವಾಯುವೇ ಸ್ಥಾನವಾಯಿತ್ತು. ನಾದವಿಸರ್ಜನಸ್ಥಾನವೇ ಜಿಹ್ವಾಚಲನ, ಬಿಂದುವಿಸರ್ಜನಸ್ಥಾನವೇ ಜಾಯೆ, ಜಾಯೆಯಿಂದಾದ ಸುತಾದಿ ರೂಪಗಳಿಗೆ ಜಿಹ್ವಾವಾಯುವಿನಿಂದಾದ ನಾಮವೇ ಕ್ರಿಯಾಸಂಬಂಧಮಾದುದರಿಂದಲೂ ಪತಿವಾಕ್ಯವನನುಸರಿಸುವುದೇ ಸತಿಗೆ ಧರ್ಮವಾದುದರಿಂದಲೂ ಜಾಯಿಗೆ ಜಿಹ್ವಾವಾಯುವೇ ಸ್ಥಾನವಾಯಿತ್ತು . ನಿಧನಕ್ಕೆ ಜಿಹ್ವಾವಾಯುವಿಗೂ ನಾಸಿಕಾವಾಯುವಿಗೂ ಸಂಧಿಯಲ್ಲಿ ಕ್ಷಯರಹಿತಮಾದ ಅಕ್ಷರವಾಯುವೇ ಸ್ಥಾನವಾಯಿತ್ತು. ಪೂರ್ವದಲ್ಲಿರ್ಪ ಅನಾಹತಚಕ್ರದಲ್ಲಿ ಪಶ್ಚಿಮದಲ್ಲಿರ್ಪ ಪೃಥ್ವೀಚಕ್ರದ ನಾಲ್ಕುದಳಂಗಳು ಕೂಡಿರ್ಪುದರಿಂ ಅನಾಹತನಲ್ಲಿ ಹನ್ನೆರಡು ದಶಗಳಾದವು. ಅನಾಹತದಲ್ಲಿ ಬೆರೆದ ನಾಲ್ಕು ದಳಂಗಳಾವುವೆಂದರೆ : ಶರೀರರೂಪಮಾದ ಪೂರ್ವಪೃಥ್ವಿಗೂ ಪುತ್ರಾದಿರೂಪಮಾದ ದಕ್ಷಿಣಪೃಥ್ವಿಗೂ ಮಧ್ಯದಲ್ಲಿರ್ಪ ಧನರೂಪಮಾದ ಆಗ್ನೇಯಪೃಥ್ವಿಯೇ ಧರ್ಮಸ್ಥಾನಮಾಯಿತ್ತು. ಪುತ್ರಾದಿದಕ್ಷಿಣಪೃಥ್ವಿಗೂ ಧಾತುರೂಪಮಾದ ಅಂತಃಪಶ್ಚಿಮಪೃಥ್ವಿಗೂ ಸಂಧಿಕಾಲಮಾಗಿರ್ಪ ನೈರುತ್ಯಪೃಥ್ವಿಯೇ ಕರ್ಮಸ್ಥಾನಮಾಯಿತ್ತು. ಶೌಚವೇ ಕರ್ಮಕ್ಕೆ ಆದಿಯಾದುದರಿಂದ ಆ ಶರೀರದೊಳಗಿರ್ಪ ಪೃಥ್ವಿಗೂ ಜಿಹ್ವೆಯಲ್ಲಿರ್ಪ ಆಹಾರೋತ್ತರಪೃಥ್ವಿಗೂ ಸಂಧಿಯಲ್ಲಿರ್ಪ ವಾಯವ್ಯಪೃಥ್ವಿಯೇ ಲಯಸ್ಥಾನಮಾಯಿತ್ತು. ಆ ಜಿಹ್ವೆಯಲ್ಲಿರ್ಪ ಪೃಥ್ವಿಗೂ ಶರೀರದಲ್ಲಿರ್ಪ ಪೃಥ್ವಿಗೂ ಸಂಧಿಯಲ್ಲಿರ್ಪ ಅನ್ನರೂಪಮಾದ ಈಶಾನ್ಯಪೃಥ್ವಿಯೇ ವ್ಯಯಸ್ಥಾನಮಾಯಿತ್ತು. ಇಂತು ಭಾವರೂಪಮಾದ ದ್ವಾದಶದಳಗಳುಳ್ಳುದೇ ಅನಾಹತಚಕ್ರವು. ಮಣಿಪೂರಕಚಕ್ರದಲ್ಲಿ ಪೂರ್ವರೂಪಮಾದ ಅಗ್ನಿಯೇ ಸ್ಥಾನವು, ಅದು ಆದಿಯಲ್ಲಿ ಶ್ರೋತ್ರವಿಷಯದಿಂದುತ್ಪನ್ನಮಾಗುತ್ತಿರ್ಪುದರಿಂ ಅದಕ್ಕೆ ಶ್ರೋತ್ರವೇ ಸ್ಥಾನಮಾಯಿತ್ತು. ಗುಹ್ಯೆಯಲ್ಲಿರ್ಪ ಅಗ್ನಿಗೂ ಉದರದಲ್ಲಿರ್ಪ ದಕ್ಷಿಣಾಗ್ನಿಗೂ ಸಂಧಿಯಲ್ಲಿ ಬೀಜಸ್ಥಾನವಾಗಿ ಪ್ರಕಾಶಿಸುತ್ತಿರ್ಪ ಕಾಮರೂಪಮಾದ ಆಗ್ನೇಯಾಗ್ನಿಗೆ ತ್ವಕ್ಕೇ ಸ್ಥಾನಮಾಯಿತ್ತು , ಉದರದಲ್ಲಿರ್ಪ ದಕ್ಷಿಣಾಗ್ನಿಯು ರೂಪಮಾಗಿಹುದು. ದೀಪನವೆಂದರೆ ವಾಂಛೆ, ಅಂತಪ್ಪ ವಾಂಛೆಯು ನೇತ್ರಮೂಲಕಮಾದುದರಿಂದಲೂ ರೂಪಕ್ಕೆ ನೇತ್ರವೇ ಕಾರಣಮಾದುದರಿಂದಲೂ ರೂಪಮಾಗಿರ್ಪ ಆಹಾರದಿಂದಾ ದೀಪನವೇ ನೇತ್ರದಲ್ಲಿರ್ಪ ಪಶ್ಚಿಮಾಗ್ನಿಯಾಗಿ ನಾಸಿಕಾಗ್ರದಲ್ಲೇಕಮಾಗಿ ಕೂಡುತ್ತಿರ್ಪುದರಿಂದ ನಾಸಿಕಾಗ್ರದಲ್ಲಿರ್ಪ ಸಮದೃಷ್ಟಿಯು ಸಕಲಯೋಗಕ್ಕೂ ಕಾರಣಮಾಗಿರ್ಪುದರಿಂ ನೇತ್ರಾಗ್ನಿಗೆ ನಾಸಿಕವೇ ಸ್ಥಾನಮಾಯಿತ್ತು. ಪಾಣಿಗೂ ಗುಹ್ಯಕ್ಕೂ ಸಂಧಿಕಾಲಮಾಗಿರ್ಪ ಸ್ವಸ್ತ್ರೀ ವಿವಾಹಸಾಕ್ಷಿಕವಾದ ಈಶಾನ್ಯಹೋಮಾಗ್ನಿಗೂ ಜಾಯಾಪಾದವೇ ಸ್ಥಾನಮಾಯಿತ್ತು. ಲಾಜಾಹೋಮಕಾಲದಲ್ಲಿ ಜಾಯಾಪಾದದಿಂದಗ್ನಿ ಸಿದ್ಧವಾಗುತ್ತಿರ್ಪುದರಿಂ ಆ ಹೋಮಾಗ್ನಿಯನ್ನು ಪಾದದಲ್ಲಿ ತಂದು ಶಿಲೆಯಲ್ಲಿ ಆವಾಹನೆಯಂ ಮಾಡುತ್ತಿರ್ಪುದರಿಂ ಈಶ್ವರರೂಪಮಾದ ಅಗ್ನಿಗೂ ಗಿರಿಜಾರೂಪಮಾದ ಶಿಲೆಗೂ ಆ ಪಾದವೇ ಕಾರಣಮಾಗಿರ್ಪುದರಿಂ ಈಶಾನ್ಯಾಗ್ನಿಗೆ ಪಾದವೇ ಸ್ಥಾನಮಾಯಿತ್ತು . ಈ ಮಣಿಪೂರಕದಶದಳಗಳಲ್ಲಿ ಅಗ್ನಿದಳಗಳೆಂಟು, ಜಲದಳಗಳೆರಡು, ಗುಹ್ಯದಲ್ಲಿರ್ಪ ಪೂರ್ವಜಲಕ್ಕೂ ಗುಹ್ಯದಳವೇ ಸ್ಥಾನಮಾಯಿತ್ತು, ಗುಹ್ಯದಲ್ಲಿರ್ಪ ಪೂರ್ವಜಲಕ್ಕೂ ಶರೀರದಲ್ಲಿರ್ಪ ದಕ್ಷಿಣಜಲಕ್ಕೂ ಸಂಧಿಯಲ್ಲಿರ್ಪ ಆಗ್ನೇಯಬಿಂದುಜಲಕ್ಕೂ ಗುದವೇ ಸ್ಥಾನಮಾಯಿತ್ತು, ಆ ಬಿಂದುವು ಗುದಸ್ಥಾನದಲ್ಲಿ ನಿಂತು ಗುಹ್ಯಮುಖದಲ್ಲಿ ನಿವೃತ್ತಿಯಾಗುತ್ತಿರ್ಪುದರಿಂ ಆ ಬಿಂದುವಿಗೆ ಗುದವೇ ಸ್ಥಾನಮಾಯಿತ್ತು. ಇಂತಪ್ಪ ದಶದಳಂಗಳುಳ್ಳುದೇ ಮಣಿಪೂರಕ. ಸ್ವಾಧಿಷಾ*ನದಲ್ಲಿ ಯಜನಕ್ಕೆ ಕರ್ಮಾಯಾಸದಿಂದುತ್ಪನ್ನಮಾಗುವ ಪೂರ್ವಜಲವೇ ಸ್ಥಾನಮಾಯಿತ್ತು. ಯಾಜನಕ್ಕೆ ಶರೀರದಲ್ಲಿರ್ಪ ದಕ್ಷಿಣಜಲಕ್ಕೂ ಜಿಹ್ವೆಯಲ್ಲಿರ್ಪ ಪಶ್ಚಿಮಜಲಕ್ಕೂ ಮಧ್ಯದಲ್ಲಿರ್ಪ ಜಲವೇ ಸ್ಥಾನಮಾಯಿತ್ತು, ಜಿಹ್ವೆಯಲ್ಲಿರ್ಪ ಪಶ್ಚಿಮಜಲವೇ ಅಧ್ಯಯನಸ್ಥಾನಮಾಯಿತ್ತು, ಜಿಹ್ವೆಯಲ್ಲಿರ್ಪ ಜಲಕ್ಕೂ ನೇತ್ರದಲ್ಲಿರ್ಪ ಉತ್ತರಜಲಕ್ಕೂ ಮಧ್ಯದಲ್ಲಿ ನಾಸಿಕದಲ್ಲಿ ವಾಸನಾಮುಖದಿಂ ದ್ರವಿಸುತ್ತಿರ್ಪ ವಾಯವ್ಯಜಲವೇ ಅಧ್ಯಾಪನಸ್ಥಾನಮಾಯಿತ್ತು, ನೇತ್ರದಲ್ಲಿರ್ಪ ಆನಂದಜಲವೇ ದಾನಕ್ಕೆ ಸ್ಥಾನಮಾಯಿತ್ತು, ನೇತ್ರದಲ್ಲಿರ್ಪ ಜಲಕ್ಕೂ ಗುಹ್ಯೆಯಲ್ಲಿರ್ಪ ಜಲಕ್ಕೂ ಮಧ್ಯದಲ್ಲಿ ಮನೋಮುಖದಲ್ಲಿ ದ್ರವಿಸುತ್ತಿರ್ಪ ಮೋಹಜಲವೇ ಪ್ರತಿಗ್ರಹಸ್ಥಾನಮಾಯಿತ್ತು. ಇಂತಪ್ಪ ಆರುದಳಂಗಳುಳ್ಳುದೇ ಸ್ವಾಧಿಷಾ*ನಚಕ್ರವು, ಆಧಾರದಲ್ಲಿ ಬ್ರಹ್ಮಚರ್ಯಕ್ಕೆ ತನುವೇ ಸ್ಥಾನಮಾಯಿತ್ತು. ಬ್ರಹ್ಮಚರ್ಯವೆಂದರೆ ಕರ್ಮ. ``ಶರೀರಮಾಧ್ಯಂ ಖಲು ಧರ್ಮಸಾಧನಂ'' ಎಂದಿರುವುದರಿಂದ ಆ ಕರ್ಮಮೂಲವೇ ಶರೀರಮಾದುದರಿಂದದಕ್ಕೆ ದೇಹವೇ ಸ್ಥಾನಮಾಯಿತ್ತು. ಪುತ್ರಾದಿ ದಕ್ಷಿಣಪೃಥ್ವಿಯೇ ಗೃಹಸ್ಥಸ್ಥಾನಮಾಯಿತ್ತು. ಶರೀರದೊಳಗೆ ಮಾಂಸಾದಿಧಾತುರೂಪಮಾಗಿರ್ಪ ಪಶ್ಚಿಮಪೃಥ್ವಿಯೇ ವಾನಪ್ರಸ್ಥಮಾಯಿತ್ತು. ಜಿಹ್ವೆಯಲ್ಲಿರ್ಪ ಉತ್ತರಪೃಥ್ವಿಯೇ ಪರಿಶುದ್ಧಮಾಗಿ ಶಿವಪ್ರಸಾದಕಾರಣಮಾಗಿರ್ಪುದು. ಜಿಹ್ವೆಯಲ್ಲಿರ್ಪ ಅನ್ನವೇ ದೀಪನಹರಣವೂ ತೃಪ್ತಿಕಾರಣವೂ ಜ್ಞಾನಾನಂದಕಾರಣವೂ ಆಗಿರ್ಪುದು. ಅಂತಪ್ಪ ಅನ್ನವೇ ಕೇವಲ ಸತ್ವಸ್ವರೂಪಮಾಗಿ ರಕ್ಷಣರೂಪಮಾದುದರಿಂದಾ ಸತ್ವವು ಸ್ಥಾನಮಾಗಿರ್ಪುದೇ ಸಂನ್ಯಾಸವು, ಇಂತಪ್ಪ ಚತುರ್ದಳಂಗಳಿಂದೊಪ್ಪುತ್ತಿರ್ಪುದೇ ಆಧಾರಚಕ್ರವು. ಪೃಥ್ವಿಗೆ ಈಶಾನ್ಯರೂಪಮಾಗಿರ್ಪ ಅನ್ನವೇ ಆಧಾರಚಕ್ರದಲ್ಲಿ ಆಚಾರಲಿಂಗಮಾಯಿತ್ತು. ಆ ಅನ್ನವೇ ಪ್ರಾಣಮಾಗಿರ್ಪುದರಿಂ ನಾಸಿಕವನನುಸರಿಸುತ್ತಿರ್ಪುದು. ಜಲಕ್ಕೆ ಈಶಾನ್ಯಮಾಗಿರ್ಪ ದಯಾರಸವೇ ಸ್ವಾಧಿಷಾ*ನದಲ್ಲಿ ಗುರುಲಿಂಗಮಾಯಿತ್ತು. ಅದು ಜಿಹ್ವಾಮುಖದಿಂ ರಕ್ಷಿಸುತ್ತಿರ್ಪುದರಿಂ ಜಿಹ್ವೆಯನನುಸರಿಸುತ್ತಿರ್ಪುದು. ಅಗ್ನಿಗೆ ಈಶಾನ್ಯವಾದ ಹೋಮಾಗ್ನಿಯೇ ಮಣಿಪೂರಕದಲ್ಲಿ ಶಿವಲಿಂಗಮಾಯಿತ್ತು. ಅದು ಯಾವಜ್ಜೀವವೂ ಅಗ್ನಿಗಿಂತಲೂ ಭಿನ್ನಮಾಗದೆ ಪ್ರಕಾಶಿಸುತ್ತಿರುವುದರಿಂ ತೇಜೋಮಯವಾದ ನೇತ್ರವನನುಸರಿಸುತ್ತಿರ್ಪುದು. ವಾಯುವಿಗೆ ಈಶಾನ್ಯರೂಪಮಾದ ಅಕ್ಷರಮಯಮಾದ ಮಂತ್ರವಾಯುವೇ ಅನಾಹತದಲ್ಲಿ ಜಂಗಮಲಿಂಗಮಾಯಿತ್ತು. ಅದು ಕ್ಷಯವಿಲ್ಲದ್ದು ; ಆ ಮಂತ್ರವು ಶರೀರವನ್ನು ಪವಿತ್ರವಂ ಮಾಡಲು, ಶರೀರ ಪೂರ್ವವಾಸನೆಯಳಿದು ಮಂತ್ರಮಯಮಾಗಿರ್ಪುದರಿಂ ತ್ವಕ್ಕನ್ನನುಸರಿಸಿರ್ಪುದು. ಆಕಾಶಕ್ಕೆ ಈಶಾನ್ಯಮಾದ ಉಪದೇಶಾಕಾಶವೇ ವಿಶುದ್ಧದಲ್ಲಿ ಪ್ರಸಾದಲಿಂಗಮಾಯಿತ್ತು. ಅದು ಪರತತ್ವಮಯಮಾಗಿರ್ಪುದರಿಂ ಶ್ರೋತ್ರವನನುಸರಿಸಿರ್ಪುದು. ಆತ್ಮನಿಗೆ ಈಶಾನ್ಯದಲ್ಲಿರ್ಪ ಶಿವಜ್ಞಾನವೇ ಆಗ್ನೇಯದಲ್ಲಿ ಮಹಾಲಿಂಗಮಾಯಿತ್ತು . ಅದು ಮನದೊಳ್ಕೂಡಿ ಪಂಚೇಂದ್ರಿಯಂಗಳಿಗೂ ಮನಸ್ಸೇ ಚೈತನ್ಯಮಾಗಿರ್ಪಂತೆ, ಪಂಚಲಿಂಗಂಗಳಿಗೆ ತಾನೇ ಚೈತನ್ಯಮಾಗಿ ದೃಷ್ಟವಶದಿಂದುದಿಸಿದ ಕಾರಣ ಆ ದೃಷ್ಟಕಾರಣಮಾದ ಲಲಾಟವನನುಸರಿಸಿರ್ಪುದು. ಆ ಶಿವಜ್ಞಾನದಿಂ ಗುರುಮುಖದಿಂದುದಿಸಿದ ಕರ್ಮಯೋಗ್ಯಮಾದುದೇ ಇಷ್ಟಲಿಂಗವು. ಆತ್ಮತೇಜಸ್ಸನ್ನೇ ಬಹಿಷ್ಕರಿಸಿ ಹೋಮಾಗ್ನಿಯಂ ಪ್ರಬಲವಂ ಮಾಡಿ ಇಷ್ಟಲಿಂಗಪ್ರಸಾದಸಾಮಗ್ರಿಯನಾಹುತಿಗೊಟ್ಟು, ಆ ತೇಜಸ್ಸನ್ನಾತ್ಮಸಮಾರೋಪಣೆಯಂ ಮಾಡಿ, ತದ್ಯಜನಶೇಷಮಾಗಿರ್ಪ ರುಚಿಮಯದಿವ್ಯತೇಜಸ್ಸೇ ಶಿವಧ್ಯಾನರೂಪಮಾದ ಪ್ರಾಣಲಿಂಗಾನುಭವವು. ಆ ಶಿವಧ್ಯಾನದಿಂದ ಗುರೂಪದೇಶಸಿದ್ಧಮಾಗಿರ್ಪ ಮಹಪ್ರಕಾಶವೇ ಪ್ರಾಣಲಿಂಗವು. ತೃಪ್ತಿರೂಪಮಾದ ತತ್ವಾನುಭಾವವೇ ನಿಜಾನುಭವಮಾಗಿರ್ಪುದೇ ಭಾವಲಿಂಗವು. ಗುರುದತ್ತವಾದಿಷ್ಟಲಿಂಗದಿಂ ಶರೀರವು ಪೂತಮಾಗಿ, ಜಂಗಮದತ್ತ ಶಿವಧ್ಯಾನತೇಜಸ್ಸಿನಿಂ ಪ್ರಾಣವು ಪವಿತ್ರಮಾಗಿ ಮಹಾಚಿದ್ರೂಪಮಾದ ಶಿವಜ್ಞಾನನಿಮಿತ್ತಸಿದ್ಧಿಯಿಂ ಭಾವವು ಪರಿಶುದ್ಧಮಾಗಿ, ಆ ಶರೀರವೇ ಇಷ್ಟಲಿಂಗಕರಣಮಾಗಿಯೂ ಪ್ರಾಣವೇ ಧ್ಯಾನಕರಣಮಾಗಿಯೂ ಭಾವವೇ ಸಿದ್ಧೀಕರಣಮಾಗಿಯೂ ಆ ಕರಣಂಗಳ್ಗೆ ಶಕ್ತಿಯಾಗಿಯೂ ಇರ್ಪುದರಿಂದಾ ಲಿಂಗವೇ ಪತಿ ತಾನೇ ಸತಿಯಾಗಿರ್ಪುದರಿಂದೆರಡರಸಂಗವೇ ಪರಮಾನಂದಮಯಮಾಗಿರ್ಪುದೇ ಪರಿಣಾಮವು. ಅಂತಪ್ಪ ಲಿಂಗಸಂಗಪರಮಾನಂದರಸದಿಂ ಪರವಶನಾಗುವಂತೆನ್ನಂ ಮಾಡಿ ಸಲಹಾ ಮಹಾಘನ ದೊಡ್ಡದೇಶಿಕಾರ್ಯಗುರುಪ್ರಭುವೆ.
--------------
ಮುಮ್ಮಡಿ ಕಾರ್ಯೇಂದ್ರ /ಮುಮ್ಮಡಿ ಕಾರ್ಯ ಕ್ಷಿತೀಂದ್ರ
ಪೃಥ್ವಿಗೆ ಮೈಯೆಲ್ಲಾ ಯೋನಿ, ಜಲಕ್ಕೆ ಶರೀರವೆಲ್ಲಾ ಕಾಲು, ಅಗ್ನಿಗೆ ಶರೀರವೆಲ್ಲಾ ಬಾಯಿ, ವಾಯುವಿಗೆ ತನುವೆಲ್ಲಾ ಮೂಗು, ಆಕಾಶಕ್ಕೆ ಕಾಯವೆಲ್ಲಾ ಹೊಟ್ಟೆ, ಆತ್ಮನಿಗೆ ಮೈಯೆಲ್ಲಾ ಕಣ್ಣು, ಪೃಥ್ವಿಗೆ ಘ್ರಾಣವೇ ಇಂದ್ರಿಯ, ಗಂಧವೇ ವಿಷಯ. ಜಲಕ್ಕೆ ಜಿಹ್ವೆಯೇ ಇಂದ್ರಿಯ, ರುಚಿಯೇ ವಿಷಯ. ಅಗ್ನಿಗೆ ನೇತ್ರವೇ ಇಂದ್ರಿಯ, ರೂಪೇ ವಿಷಯ. ವಾಯುವಿಗೆ ತ್ವಕ್ಕೇ ಇಂದ್ರಿಯ, ಸ್ಪರ್ಶನವೇ ವಿಷಯ. ಆಕಾಶಕ್ಕೆ ಶ್ರೋತ್ರವೇ ಇಂದ್ರಿಯ, ಶಬ್ದವೇ ವಿಷಯ. ಆತ್ಮನಿಗೆ ಮನಸ್ಸೇ ಇಂದ್ರಿಯ, ಭಾವವೇ ವಿಷಯ. ಪೃಥ್ವಿಯಲ್ಲಿರ್ಪ ಗಂಧಕ್ಕೆ ಘ್ರಾಣೇಂದ್ರಿಯವೇ ಕಾರಣಮಾಯಿತ್ತು. ಜಲದೊಳಗಿರ್ಪ ರುಚಿಗೆ ಜಿಹ್ವೇಂದ್ರಿಯದಲ್ಲಿರ್ಪ ಅಗ್ನಿಯೇ ಕಾರಣಮಾಯಿತ್ತು ಅಗ್ನಿಯಲ್ಲಿರ್ಪ ರೂಪಿಗೆ ನೇತ್ರೇಂದ್ರಿಯದಲ್ಲಿರ್ಪ ಜಲಮೆ ಕಾರಣಮಾಯಿತ್ತು. ವಾಯುವಿನೊಳಗಿರ್ಪ ಸ್ಪರುಶನಕ್ಕೆ ತ್ವಗೀಂದ್ರಿಯದಲ್ಲಿರ್ಪ ಪೃಥ್ವಿಯೇ ಕಾರಣಮಾಯಿತ್ತು. ಆಕಾಶದಲ್ಲಿರ್ಪ ಶಬ್ದಕ್ಕೆ ಶ್ರೋತ್ರೇಂದ್ರಿಯದಲ್ಲಿರ್ಪ ಆತ್ಮನೇ ಕಾರಣಮಾಯಿತ್ತು. ಆತ್ಮನಲ್ಲಿರ್ಪ ಭಾವಕ್ಕೆ ಹೃದಯೇಂದ್ರಿಯದಲ್ಲಿರ್ಪ ಆಕಾಶಮೇ ಕಾರಣಮಾಯಿತ್ತು. ಇಂತಪ್ಪ ಭಾವದಲ್ಲಿ ಜ್ಞಾನಶಕ್ತಿ ಹುಟ್ಟಲು, ಮನವೇ ಮಹಾಲಿಂಗವಾಯಿತ್ತು. ಶಬ್ದದಲ್ಲಿ ಪರಾಶಕ್ತಿ ಹುಟ್ಟಲು, ಶ್ರೋತ್ರವೇ ಪ್ರಸಾದಲಿಂಗಮಾಯಿತ್ತು. ಸ್ಪರ್ಶನದಲ್ಲಿ ಆದಿಶಕ್ತಿ ಹುಟ್ಟಲು, ಘ್ರಾಣವೇ ಆಚಾರಲಿಂಗಮಾಯಿತ್ತು. ಗ್ರಹಿಸುವುದೇ ಜ್ಞಾನೇಂದ್ರಿಯಮಾಯಿತ್ತು ; ಬಿಡುವುದೇ ಕರ್ಮೇಂದ್ರಿಯಮಾಯಿತ್ತು. ಇಂತಪ್ಪ ಇಂದ್ರಿಯಂಗಳೆಲ್ಲಾ ಲಿಂಗಸ್ವರೂಪಗಳಾಗಿ, ವಿಷಯಂಗಳೇ ಶಕ್ತಿಸ್ವರೂಪಮಾದ ಮಹಾಪುರುಷನಸ್ವರೂಪಿನಲ್ಲಿ ಇಷ್ಟಲಿಂಗವು ನೆಲೆಗೊಂಡಲ್ಲಿ, ಆ ಲಿಂಗದ ಮೋಹವೇ ಪ್ರಾಣಲಿಂಗಮಾಯಿತ್ತು, ಆ ಲಿಂಗದ ವಿಚಾರವೇ ಭಾವಲಿಂಗಮಾಯಿತ್ತು. ಭೂತಂಗಳೇ ಲಿಂಗಕ್ಕೆ ಅಂತರಂಗಂಗಳಾದವು. ಅಲ್ಲಲ್ಲಿರ್ಪ ಲಿಂಗಂಗಳೇ ಭೂತಂಗಳಿಗೆ ಚೈತನ್ಯಮಾದ ಪ್ರಾಣಂಗಳಾಗಿ, ಆ ಲಿಂಗಂಗಳೇ ಶರಣನಂಗಂಗಳಾಗಿ, ಲಿಂಗಂಗಳೇ ಶಿವನಾಗಿ, ಶರಣನೇ ಸತಿ ಲಿಂಗವೇ ಪತಿಯಾಗಿ, ಇಬ್ಬರ ಸಮರಸಭಾವವೇ ಪರಮಾನಂದರತಿಸುಖಮಾಗಿ, ಆ ಸುಖದಲ್ಲಿ ಎರಡಂ ಏಕಮಾಗಿ ಭೇದದೋರದೆ ನಿಶ್ಶಬ್ದಬ್ರಹ್ಮವಾಗಿರ್ಪುದೆ ಲಿಂಗೈಕ್ಯ ಕಾಣಾ ಮಹಾಘನ ದೊಡ್ಡದೇಶಿಕಾರ್ಯಗುರುಪ್ರಭುವೆ.
--------------
ಮುಮ್ಮಡಿ ಕಾರ್ಯೇಂದ್ರ /ಮುಮ್ಮಡಿ ಕಾರ್ಯ ಕ್ಷಿತೀಂದ್ರ
ಇನ್ನೀ ಲಿಂಗಮುಖಕ್ಕೆ ಅರ್ಪಿಸುವ ಅವಧಾನವಾವುದೆಂದೊಡೆ: ಪೃಥ್ವಿಯೇ ಅಂಗವಾದ ಭಕ್ತನು ಸುಚಿತ್ತವೆಂಬ ಹಸ್ತದಿಂದ ಆಚಾರಲಿಂಗಕ್ಕೆ ಘ್ರಾಣವೆಂಬ ಮುಖದಲ್ಲಿ ಗಂಧವ ಸಮರ್ಪಣವ ಮಾಡಿ ಆಚಾರಲಿಂಗದ ಪ್ರಸನ್ನ ಪ್ರಸಾದವ ಸ್ವೀಕರಿಸುತ್ತಿಪ್ಪನಯ್ಯ. ಜಲವೇ ಅಂಗವಾದ ಮಾಹೇಶ್ವರನು ಸುಬುದ್ಧಿಯೆಂಬ ಹಸ್ತದಿಂದ ಗುರುಲಿಂಗಕ್ಕೆ ಜಿಹ್ವೆಯೆಂಬ ಮುಖದಲ್ಲಿ ರಸವನು ಸಮರ್ಪಣವ ಮಾಡಿ ಗುರುಲಿಂಗದ ಪ್ರಸನ್ನ ಪ್ರಸಾದವ ಸ್ವೀಕರಿಸುತ್ತಿಪ್ಪನಯ್ಯ. ಅಗ್ನಿಯೇ ಅಂಗವಾದ ಪ್ರಸಾದಿಯು ನಿರಹಂಕಾರವೆಂಬ ಹಸ್ತದಿಂದ ಶಿವಲಿಂಗಕ್ಕೆ ನೇತ್ರವೆಂಬ ಮುಖದಲ್ಲಿ ರೂಪವ ಸಮರ್ಪಣವ ಮಾಡಿ ಶಿವಲಿಂಗದ ಪ್ರಸನ್ನ ಪ್ರಸಾದವ ಸ್ವೀಕರಿಸುತ್ತಿಪ್ಪನಯ್ಯ. ವಾಯುವೇ ಅಂಗವಾದ ಪ್ರಾಣಲಿಂಗಿಯು ಸುಮನವೆಂಬ ಹಸ್ತದಿಂದ ಜಂಗಮಲಿಂಗಕ್ಕೆ ತ್ವಕ್ಕೆಂಬ ಮುಖದಲ್ಲಿ ಸ್ಪರ್ಶನ ಸಮರ್ಪಣವಮಾಡಿ ಜಂಗಮಲಿಂಗದ ಪ್ರಸನ್ನ ಪ್ರಸಾದವ ಸ್ವೀಕರಿಸುತ್ತಿಪ್ಪನಯ್ಯ. ಆಕಾಶವೇ ಅಂಗವಾದ ಶರಣನು ಸುಜ್ಞಾನವೆಂಬ ಹಸ್ತದಿಂದ ಪ್ರಸಾದಲಿಂಗಕ್ಕೆ ಶ್ರೋತ್ರವೆಂಬ ಮುಖದಲ್ಲಿ ಶಬ್ದವ ಸಮರ್ಪಣವ ಮಾಡಿ ಪ್ರಸಾದಲಿಂಗದ ಪ್ರಸನ್ನ ಪ್ರಸಾದವ ಸ್ವೀಕರಿಸುತ್ತಿಪ್ಪನಯ್ಯ. ಆತ್ಮನೇ ಅಂಗವಾದ ಐಕ್ಯನು ಸದ್ಭಾವವೆಂಬ ಹಸ್ತದಿಂದ ಮಹಾಲಿಂಗಕ್ಕೆ ಮನೆವೆಂಬ ಮುಖದಲ್ಲಿ ತೃಪ್ತಿಯ ಸಮರ್ಪಣವ ಮಾಡಿ ಮಹಾಲಿಂಗದ ಪ್ರಸನ್ನ ಪ್ರಸಾದವ ಸ್ವೀಕರಿಸುತ್ತಿಪ್ಪನಯ್ಯ. ಈ ಅರ್ಪಿತ ಅವಧಾನದ ಭೇದವನರಿದು ಭೋಗಿಸುವ ಭೋಗವಲ್ಲವು ಲಿಂಗಭೋಗ ಪ್ರಸಾದ, ಅಂಗಭೋಗ ಅನರ್ಪಿತ; ಅನಪಿರ್ತವೇ ಕರ್ಮದ ತವರುಮನೆ, ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವನೊಮ್ಮೆಯೂ ಮುಟ್ಟವು.
--------------
ತೋಂಟದ ಸಿದ್ಧಲಿಂಗ ಶಿವಯೋಗಿಗಳು
ಕೇವಲ ಸದ್ರೂಪಮಾದ ನಿಷ್ಕಳಶಿವತತ್ವವು ತನ್ನೊಳ್ತಾನೇ ಪ್ರಕಾಶಿಸುತ್ತಿರ್ಪುದರಿಂ ಪರಮಾತ್ಮನೆಂಬ ಸಂಜ್ಞೆಯಿಂ ತನ್ನ ನಿಜಮಹಾತ್ಮ್ಯ ಪ್ರಕಟನೆಗೋಸುಗ ತಾನೇ ಆತ್ಮನಾಗಿ, ಆತ್ಮನೇ ಆಕಾಶವಾಗಿ, ಆಕಾಶವೇ ವಾಯುವಾಗಿ, ವಾಯುವೇ ಅಗ್ನಿಯಾಗಿ, ಅಗ್ನಿಯೇ ಜಲಮಾಗಿ, ಆ ಜಲವೇ ಪೃಥ್ವೀರೂಪವಾಗಿ ಘÀಟ್ಟಿಕೊಂಡು ಆ ಪೃಥ್ವಿಗೆ ಜಲವೇ ಕಾರಣಮಾಗಿ, ಆ ಜಲಕಗ್ನಿಯೇ ಕಾರಣಮಾಗಿ, ಆ ಅಗ್ನಿಗೆ ವಾಯುವೇ ಕಾರಣಮಾಗಿ, ಆ ವಾಯುವಿಗೆ ಆಕಾಶವೇ ಕಾರಣಮಾಗಿ, ಆ ಆಕಾಶಕ್ಕಾತ್ಮನೇ ಕಾರಣಮಾಗಿ, ಆ ಆತ್ಮನಿಗೆ ಪರಮಾತ್ಮನೇ ಕಾರಣಮಾಗಿ, ಒಂದಕ್ಕೊಂದು ತಮ್ಮಲ್ಲಿಯೇ ತಾವು ಸೃಷ್ಟಿ ಸ್ಥಿತಿ ಸಂಹಾರಂಗಳಿಗೆ ಕಾರಣಮಾಗಿರ್ಪ, ಆತ್ಮಾದಿ ಷಡ್ಭೂತಂಗಳಿಗೆ ತಾನೇ ಚೈತನ್ಯ ಸ್ವರೂಪಮಾಗಿರ್ಪ ಪರಮನು ಆತ್ಮಸಂಗದಿಂ ಜೀವಕೋಟಿಗಳಂ ಸೃಷ್ಟಿಸಿ, ಕರ್ಮಕ್ಕೆ ಕಾರಣಮಂ ಮಾಡಿ ಕ್ರೀಡಿಸುತ್ತಿರ್ದನದೆಂತೆಂದೊಡೆ: ಜಲವು ತಾನೇ ಪೃಥ್ವೀಸ್ವರೂಪಮಾಗಿ ಬಲಿದು, ಆ ಪೃಥ್ವಿಯನ್ನೇ ತನಗಾಧಾರವಂ ಮಾಡಿಕೊಂಡು, ತಾನೇ ಪೃಥ್ವಿಗೆ ಆಧಾರಮಾಗಿ, ಪೃಥ್ವಿಯಂ ಪರಿವೇಷಿ*ಸಿರ್ಪ ಜಲವೇ ಪತಿಯಾಗಿ, ಪೃಥ್ವಿಯಲ್ಲಿ ಪರಿವ ಜಲವೇ ಸತಿಯಾಗಿರ್ಪ ಆ ಜಲಬಂಧದಿಂ ಕುಡ್ಯ ಸೌಧ ಗೃಹಾದಿ ನಾನಾಸ್ವರೂಪಂಗಳಾಗಿ ನಿಂತು, ತನ್ನಲ್ಲಿರ್ಪ ಜಲವಾರಿಹೋಗಲು, ಆ ಸೃಷ್ಟಿಶಕ್ತಿಯಿಂ ತಾಂ ಘಟ್ಟಿಕೊಂಡು, ಜೀವರಿಗೆ ಜಲಹಿಂಸೆಯಂ ನಿವಾರಣಮಾಡುತ್ತಾ, ಆ ಜಲದಿಂದಲ್ಲೇ ತಾನು ಲಯವನೈದುತ್ತಿರ್ದಂದದಿ, ಆ ಪರಮಾತ್ಮನೇ ಆತ್ಮನಂ ಸುತ್ತಿ, ಆತ್ಮನಲ್ಲೇ ಸುಳಿದು, ತಾನೇ ಶಿವಶಕ್ತಿಸ್ವರೂಪಮಾಗಿ, ತನ್ನಿಂದ ಬುದ್ಧಮಾಗಿರ್ಪ ಆತ್ಮಪದಾರ್ಥದಲ್ಲಿ ಜೀವಜಾಲಂಗಳಂ ಸೃಷ್ಟಿಸಿ, ಪೃಥ್ವಿಯಲ್ಲಿ ಬೆಳೆದ ಬೆಳೆಯನ್ನು ಗೃಹದಲ್ಲಿ ತುಂಬಿ, ಶರೀರದಿಂದ ಅನುಭವಿಸುವಂದದಿ ಆತ್ಮನಿಂದ ಬೆಳೆದ ಕರ್ಮದ ಬೆಳಸನ್ನು ಜೀವಂಗಳಲ್ಲಿ ತುಂಬಿ, ತದನುಭವಕ್ಕೆ ತಾನೇ ಕಾರಣಮಾಗಿ, ನಿಜಮಹಾತ್ಮ್ಯ ಪ್ರಕಟನಮಂ ಮಾಡಿಯಾಡುತಿರ್ಪಭವನೆ ನಿನ್ನ ಸಂಬಂಧಮಾಗಿರ್ಪುದಂ ಭಾವದಲ್ಲಿ ತಿಳಿದುನೋಡಿದಲ್ಲಿ, ಎಲ್ಲವೂ ನೀನಾಗಿರ್ಪೆಯಲ್ಲದೆ, ಪೆರೆತೊಂದುಂಟೇನಯಾ? ನಿನ್ನ ಕ್ರೀಡಾನಿಮಿತ್ತ ನಾನೆಂಬ ಬರಿಯ ಭ್ರನೆಯಂ ಸೃಷ್ಟಿಸಿ, ಕಷ್ಟಬಡಿಪುದೊಳ್ಳಿತ್ತೇನಯ್ಯಾ? ಅರಿತವನ ಮುಂದೆ ಇಂದ್ರಜಾಲವಂ ಮಾಡಲು ಪರಿಶೋಭಿಸಬಲ್ಲುದೆ? ನಿನ್ನ ಮಾಯೆಯೆನಗೆ ಮನೋರಥಮಾಗಬಲ್ಲುದೆ? ಬೇರ ಬಲ್ಲವಂಗೆ ಎಲೆಯಂ ತೋಋಹೋದರೆ, ಅಪಹಾಸ್ಯಕಾರಣಮಾಗಿಹುದು. ಇದನರಿತು ನನ್ನಂ ಕಾಡದಿರು ಕಂಡ್ಯಾ ಮಹಾಘನ ದೊಡ್ಡದೇಶಿಕಾರ್ಯಗುರುಪ್ರಭುವೆ.
--------------
ಮುಮ್ಮಡಿ ಕಾರ್ಯೇಂದ್ರ /ಮುಮ್ಮಡಿ ಕಾರ್ಯ ಕ್ಷಿತೀಂದ್ರ
ಆ ಪ್ರಾಣಲಿಂಗಿಯಲ್ಲಿಯ ಪ್ರಸಾದಿಗೆ ವಾಯುವಿನಲ್ಲಿಯ ಅಗ್ನಿಯೇ ಅಂಗ. ಆ ಅಂಗಕ್ಕೆ ಸುಮನದಲ್ಲಿಯ ನಿರಹಂಕಾರವೇ ಹಸ್ತ. ಆ ಹಸ್ತಕ್ಕೆ ಜಂಗಮಲಿಂಗದಲ್ಲಿಯ ಶಿವಲಿಂಗವೇ ಲಿಂಗ. ಆ ಶಿವಲಿಂಗದಮುಖದಲ್ಲಿ ಉಷ್ಣವಾದ ಸ್ಪರ್ಶನದ್ರವ್ಯವನು ಸಮರ್ಪಣವಂ ಮಾಡಿ, ತೃಪ್ತಿಯನೆ ಭೋಗಿಸುವನು ನೋಡಾ ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
-->