ಅಥವಾ

ಒಟ್ಟು 40 ಕಡೆಗಳಲ್ಲಿ , 17 ವಚನಕಾರರು , 39 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಆರುಸ್ಥಲದಲ್ಲಿ ಅರಿತಿಹೆನೆಂದು ಸಹಭೋಜನದಲ್ಲಿ ಉಂಬ ಅಣ್ಣಗಳು ನೀವು ಕೇಳಿರೊ ! ಅಂಗದ ಮೇಲೆ ಲಿಂಗಸಂಬಂಧಿಯಾದಡೇನಯ್ಯ, ಆ ಲಿಂಗವ ತನ್ನ ಪ್ರಾಣಕ್ಕೆ ಅವಧರಿಸದನ್ನಕ್ಕ ! ಆ ಇಷ್ಟಲಿಂಗಕ್ಕೆ ಅಷ್ಟವಿಧಾರ್ಚನೆ ಷೋಡಶೋಪಚಾರ ಬಾಹ್ಯಕ್ರೀಯ ಮಾಡಿದಡೇನಯ್ಯ ನೈಷ್ಠೆಇಲ್ಲದನ್ನಕ್ಕ ಅಷ್ಟಮದಂಗಳ ನಷ್ಟವಮಾಡಿ ಪಂಚೇಂದ್ರಿಯಂಗಳ ಲಿಂಗಮುಖವ ಮಾಡಿ ದೇಹೇಂದ್ರಿಯ ಮನ ಪ್ರಾಣಾದಿಗಳ ಪ್ರಕೃತಿಯನಳಿದು ! ಇಷ್ಟ ಪ್ರಾಣ ಭಾವವೆಂಬ ತ್ರಿವಿಧ ಲಿಂಗಕ್ಕೆ ರೂಪು ರುಚಿ ತೃಪ್ತಿಯನೀವ ವರ್ಮಾದಿವರ್ಮಂಗಳ ಭೇದವನರಿಯದೆ ! ಕರಸ್ಥಲದಲ್ಲಿ ಲಿಂಗವಿಡಿದು ಸಹಭೋಜನವೆಂದು ಒಂದಾಗಿ ಉಂಡು ತಮ್ಮ ಒಡಲ ಹೊರೆವ ಲಿಂಗದ್ರೋಹಿಗಳ ನೋಡಿ ನಗುತ್ತಿರ್ದೆನಯ್ಯಾ ಗುಹೇಶ್ವರಾ.
--------------
ಅಲ್ಲಮಪ್ರಭುದೇವರು
ವೇದವನೋದುವ ಅಣ್ಣಗಳು ನೀವು ಕೇಳಿರೊ ! ವೇದ ವೇದಿಸಲಿಲ್ಲ ಶಾಸ್ತ್ರ ಸಾಧಿಸಲಿಲ್ಲ; ಪುರಾಣ ಪೂರೈಸಲಿಲ್ಲ, ಆಗಮಕ್ಕೆ ಆದಿಯಿಲ್ಲ. ಇದು ಕಾರಣ_ ಆದ್ಯರಲ್ಲ, ವೇದ್ಯರಲ್ಲ, ಸಾಧ್ಯರಲ್ಲ ಬರಿಯ ಹಿರಿಯರು ನೋಡಾ, ಕೂಡಲಚೆನ್ನಸಂಗಮದೇವಾ.
--------------
ಚನ್ನಬಸವಣ್ಣ
ಪರಸ್ತ್ರೀ ಪರಾರ್ಥ ಪರಾನ್ನಕ್ಕೆ ಸುಳಿವ ಅಣ್ಣಗಳು ನೀವು ಕೇಳಿರೆ. ಪರಸ್ತ್ರೀಗೆ ಚಕ್ಷುದಗ್ಧವಾಗಿರಬೇಕು ಕೇಳಿರಣ್ಣಾ . ಪರಾರ್ಥಕ್ಕೆ ಹಸ್ತದಗ್ಧವಾಗಿರಬೇಕು ಕೇಳಿರಣ್ಣಾ . ಪರಾನ್ನಕ್ಕೆ ಜಿಹ್ವೆದಗ್ಧವಾಗಿರಬೇಕು ಕೇಳಿರಣ್ಣಾ . ನಿಂದೆಸ್ತುತಿಗೆ ಕಿವುಡನಾಗಿರಬೇಕು ಕೇಳಿರಣ್ಣಾ . ಬಯಲಬ್ರಹ್ಮವ ನುಡಿವ ತರ್ಕಿಗಳ ಕಂಡಡೆ ಮಾಗಿಯ ಕೋಗಿಲೆಯಂತೆ ಮೂಗನಾಗಿರಬೇಕು ಶರಣನು ಕೇಳಿರಣ್ಣಾ , ಇವರಿಂಗೆ ಭವನಾಸ್ತಿ ನೋಡಾ ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಪ್ರಾಣಲಿಂಗಿಗಳೆಂದು ನುಡಿವುತಿಪ್ಪ ಅಣ್ಣಗಳು ನೀವು ಕೇಳಿರೆ. ಲಿಂಗಕ್ಕೆ ಪ್ರಾಣ ಮೊದಲೋ? ಪ್ರಾಣಕ್ಕೆ ಲಿಂಗ ಮೊದಲೋ? ಈ ಉಭಯವ ವಿಚಾರಿಸಿಕೊಂಡು ನುಡಿಯಿರಣ್ಣಾ. ವಾಯು ಗಂಧವ ಸೋಂಕಿತೊ? ಗಂಧ ವಾಯುವ ಸೋಂಕಿತೊ? ಲಿಂಗವ ಮನವರಿಯಿತೊ? ಮನವ ಲಿಂಗವರಿಯಿತೊ? ಕಾಯದಿಂದ ಸೋಂಕಿದ ಸುಖವ ಮನದಿಂದರಿದವರಾರೊ? ಮನದಲ್ಲಿ ಮುಟ್ಟಿದ ಗುಣವ ತನುವಿನಿಂದರಿದವರಾರೊ? ಇಂತೀ ಉಭಯವನರಿದಡೆ ಪ್ರಾಣಲಿಂಗಿಗಳೆಂಬೆ. ಉರಿ ಸೋಂಕಿದ ಕರ್ಪುರಕ್ಕೆ ನಿಲುವುದಕ್ಕೆ ನೆಲೆವನೆಯಿನ್ನಾವುದೊ? ಭ್ರಮರ ಸೋಂಕಿದ ಸುವಾಸನೆಗೆ ಕಡೆ ನಡು ಮೊದಲಾವುದೊ? ಧೂಳು ಕೊಂಡ ಜಲಕ್ಕೆ ನೆಲೆಯಿನ್ನಾವುದೊ? ಲಿಂಗ ಸೋಂಕಿದ ಮನಕ್ಕೆ, ಲಿಂಗನವರಿವುದಕ್ಕೆ ನೆಲೆಗೊಂಬ ಠಾವಿನ್ನಾವುದೊ? ಇಂತೀ ಗುಣಂಗ[ಳೆಲ್ಲ] ಕಳೆದುಳಿದ ಮಹಾತ್ಮಂಗೆ ನಮೋ ನಮೋ, ನಿಃಕಳಂಕ ಮಲ್ಲಿಕಾರ್ಜುನಾ.
--------------
ಮೋಳಿಗೆ ಮಾರಯ್ಯ
ಹೆಣ್ಣಿನೊಳಗೆ ಕಣ್ಣುಗೊಂಡು ಹುಟ್ಟಿ, ಮಣ್ಣು ಹೊಯ್ದುಕೊಂಬ ಅಣ್ಣಗಳು ನೀವು ಕೇಳಿರೆ. ಈ ಬಣ್ಣದ ಪರಿಯಾಯಕ್ಕೆ ಕಣ್ಣುಗೆಟ್ಟು ಬಿದ್ದಿರಲ್ಲಾ. ಈ ಹೆಣ್ಣಿನ ಸಂಗ ನಿಮಗೇತಕಣ್ಣಾ. ತನ್ನಲ್ಲಿ ಹೆಣ್ಣುಂಟು, ತನ್ನಲ್ಲಿ ಹೊನ್ನುಂಟು, ತನ್ನಲ್ಲಿ ಮಣ್ಣುಂಟು. ಇಂತಿವ ನಿಮ್ಮಲ್ಲಿ ನೀವು ತಿಳಿದು ನೋಡಲಿಕ್ಕೆ, ತನ್ನಲ್ಲಿ ತಾನೆ ಕಾಣಬಹುದು. ತನ್ನ ತಾನರಿಲ್ಲದೆ ಇದಿರನರಿಯಬಾರದು. ಇದಿರನರಿದಲ್ಲದೆ ಪರವನರಿಯಬಾರದು. ಪರವನರಿದಲ್ಲದೆ ಸ್ವಯವನರಿಯಬಾರದು. ಸ್ವಯವನರಿದಲ್ಲದೆ ಅರಿವು ತಲೆದೋರದು ಅರಿವು ತಲೆದೋರಿದಲ್ಲದೆ ಕುರುಹು ನಷ್ಟವಾಗದು. ಕುರುಹು ನಷ್ಟವಾದಲ್ಲದೆ ಮಾಯೆ ಹಿಂಗದು. ಮಾಯ ಹಿಂಗಿದಲ್ಲದೆ ಮದವಳಿಯದು. ಮದವಳಿದಲ್ಲದೆ ಮತ್ಸರ ಹೆರೆಸಾರದು. ಮತ್ಸರ ಹೆರೆಸಾರಿದಲ್ಲದೆ ಮಹಾಘನವಳವಡದು. ಮಹಾಘನವಳವಟ್ಟಲ್ಲದೆ ಮಹಾಲಿಂಗವ ಕಾಣಬಾರದು. ಮಹಾಲಿಂಗವ ಕಂಡಲ್ಲದೆ ಮಹಾಪ್ರಕಾಶವ ಕಾಣಬಾರದು. ಮಹಾಪ್ರಕಾಶವ ಕಂಡಲ್ಲದೆ ನಿತ್ಯವ ಕಾಣಬಾರದು. ನಿತ್ಯವ ಕಂಡಲ್ಲದೆ ನಿಜವ ಕಾಣಬಾರದು. ನಿಜವ ಕಂಡಲ್ಲದೆ ನಿರ್ಣಯವನರಿಯಬಾರದು. ನಿರ್ಣಯವನರಿದಲ್ಲದೆ ಗುರುಲಿಂಗಜಂಗಮವನರಿಯಬಾರದು. ಗುರುಲಿಂಗಜಂಗಮವನರಿದಲ್ಲದೆ ಪಾದತೀರ್ಥಪ್ರಸಾದವನರಿಯಬಾರದು. ಪಾದತೀರ್ಥಪ್ರಸಾದವನರಿದಲ್ಲದೆ ಸಹಜ ಶರಣರ ಸಂಗವನರಿಯಬಾರದು. ಇಂತಪ್ಪ ಶರಣರ ಸಂಗವನರಿದಲ್ಲದೆ ಸರ್ವನಿರ್ಣಯವನರಿಯಬಾರದು. ಸರ್ವನಿರ್ಣಯವನರಿದಲ್ಲದೆ ಸಹಜಸದ್ಭಕ್ತರು ಮೆಚ್ಚರು. ಸಹಜಸದ್ಭಕ್ತರು ಕೂಡಿ ನಡೆಯಬಲ್ಲಡೆ ಇದೇ ಸುಖವು. ಸಂಗದೊಳಗೆ ಶರಣರ ಸಂಗವೆ ಸಂಗವು ಕೇಳಿರಯ್ಯಾ. ಇಂತು ಸಾಯದೆ ನೋಯದೆ ಸ್ವಯವನರಿದು, ಸದ್ಭಕ್ತರ ಸಂಗವ ಮಾಡಬಲ್ಲಾತನೆ ಲಿಂಗೈಕ್ಯನು. ಅವ ತಾನೆ ಘನಲಿಂಗವು. ಹೀಂಗಲ್ಲದೆ ಹಿಂದೆ ಮೆಟ್ಟಿಹೋಹ ಸಂದೇಹಿ ಮಾನವರೆಲ್ಲರೂ ಜಗದ ಜಂಗುಳಿಗಳ ದಂದುಗದೊಳಗಾಗಿಪ್ಪರು. ಆ ಗುಣವ ಬಿಟ್ಟು, ಶರಣರ ಸಂಗ ಸಹಜವೆಂದರಿದು, ನಿಜವಾಗಿ ಬಂದಬಳಿಕ ಪೂರ್ವಭಾಗೆಗೆ ಬಾರೆನೆಂಬ ನಿಶ್ಚಯದಿಂ ಪರಮ ಪ್ರಸಾದವನರಿದು, ಜಗದ ಹಂಗ ಹರಿದ ಶರಣನು ಎನ್ನ ತಂದೆಯಾಗಿಪ್ಪನು ಕಾಣಾ, ಶುದ್ಧಸಿದ್ಧ ಪ್ರಸಿದ್ಧ ಪ್ರಸನ್ನ ಪ್ರಭುವೆ ಶಾಂತಚೆನ್ನಮಲ್ಲಿಕಾರ್ಜುನದೇವಯ್ಯಾ. ಈ ಬಂದ ಪರಿಯಾಯವರಿದು, ತಾಮಸವ ಹಿಂಗಿ, ಸಹಜ ನಿಜನಿತ್ಯವನರಿದು ಹೋದ ಶರಣರ ನಿಲವಿನ ಪರಿಯ, ನೀವೆ ಬಲ್ಲಿರಲ್ಲದೆ ನಾನೆತ್ತ ಬಲ್ಲೆನಯ್ಯಾ, ನಿಮ್ಮ ಧರ್ಮ ನಿಮ್ಮ ಧರ್ಮ ನಿಮ್ಮ ಧರ್ಮ
--------------
ಮರುಳಶಂಕರದೇವ
ತುಂಬಿದ ತೊರೆಯ ಹಾಯ್ದಹೆವೆಂದು ಹರುಗೋಲನೇರುವ ಅಣ್ಣಗಳು ನೀವು ಕೇಳಿರೆ. ತೊರೆಯೊಳಗಣ ನೆಗಳು ಹರುಗೋಲ ನುಂಗಿದಡೆ, ಗತಿಯಿಲ್ಲ. ಎಚ್ಚತ್ತು ನಡಿಸಿರೆ. ನಡುದೊರೆಯಲ್ಲಿ ಹುಟ್ಟು ಹಾಯ್ಕಿದಡೆ, ಹರುಗೋಲು ಮುಳುಗದೆ, ಏರಿದವರು ಸತ್ತರು. ಇದರೊಳಹೊರಗನರಿದಾತನಲ್ಲದೆ ಗುಹೇಶ್ವರಲಿಂಗದಲ್ಲಿ ಅಚ್ಚ ಶರಣನಲ್ಲ.
--------------
ಅಲ್ಲಮಪ್ರಭುದೇವರು
ಇಷ್ಟಲಿಂಗವನರಿದು ಪೂಜೆಯ ಮಾಡಿ, ಪ್ರಾಣಲಿಂಗವನರಿದು ಪಥ್ಯದ ಕೊಂಡು, ಜಂಗಮವಾದೆವೆಂಬ ಮಿಥ್ಯತಥ್ಯದ ಅಣ್ಣಗಳು ಕೇಳಿರೊ. ಕೊಟ್ಟಾತಗುರು, ಕೊಂಡಾತ ಶಿಷ್ಯನೆಂದು ಜಗದಲ್ಲಿ ಅಂದಗಾರಿಕೆಯಲ್ಲಿ ನಡೆವ ಭಂಡರಿಗೇಕೆ ಲಿಂಗಾಂಗ, ನಿಃಕಳಂಕ ಮಲ್ಲಿಕಾರ್ಜುನಾ.
--------------
ಮೋಳಿಗೆ ಮಾರಯ್ಯ
ಅಣ್ಣಗಳು ಕೇಳಿರೆ, ಅಣ್ಣಗಳು ಕೇಳಿರೆ, ಲೋಹಿತೇಶ್ವರದೇವರ ಮರೆ ಬಂದು ಒರಸೀತು, ಸುವರ್ಣದ ಕಳಸ ವೆಚ್ಚವಾದೀತು, ಜಪತಾವಡ ಮಣಿ ಹರಿದಾವು, ಗುರುಹಿರಿಯರೆಲ್ಲಾ ಹೆಡೆಗುಡಿಯ ಕಟ್ಟಿಗೊಳಗಾದಾರು ಕಪಿಲೆ ಬಾಣಸಕ್ಕೆ ಬಂದೀತು, ಸೊನ್ನಲಿಗೆಯ ಪುಣ್ಯಕ್ಷೇತ್ರವಳೀತು ಇಂತೀ ಎನ್ನ ಕಪಿಲಸಿದ್ಧಮಲ್ಲಿಕಾರ್ಜುನದೇವರು ಇಲ್ಲಿಯೂ ಇಲ್ಲ, ಅಲ್ಲಿಯೂ ಇಲ್ಲ.
--------------
ಸಿದ್ಧರಾಮೇಶ್ವರ
ಎಸವಿನ ಗುರು ಹೋಗಿ ಶಿಶುವಧೆಯ ಮಾಡಿದ. ಶಿಶು ಹೋಗಿ ಮರಳಿ ಗುರುವ ಕೊಂದಡೆಯು, ಹೆಸರುಗೊಂಬ ಅಣ್ಣಗಳು ನೀವು ಕೇಳಿರೋ: ವರಿಬ್ಬರೂ ಸತ್ತಠಾವನೊಬ್ಬರೂ ಅರಿಯರು, ನಿರ್ವಯಲೆಂದಾತನಂಬಿಗ ಚೌಡಯ್ಯ.
--------------
ಅಂಬಿಗರ ಚೌಡಯ್ಯ
ಎಲೆ ಗುರುಕಾರುಣ್ಯವಾಯಿತ್ತೆಂಬ ಅಣ್ಣಗಳು ನೀವು ಕೇಳಿರೆ :ಶಿವನಾವಕಡೆ ಶಕ್ತಿ ಆವ ಕಡೆ ? ಉತ್ಪತ್ಯವ ಬಲ್ಲರೆ ನೀವು ಹೇಳಿರೆ ! ಶಕ್ತಿಯ ಮೇಲೆ ಸಾಹಿತ್ಯವ ಮಾಡಿಕೊಟ್ಟನಲ್ಲಾ ನಿಮ್ಮ ಗುರು. ಶಿವನ ಶಿವಂಗರ್ಪಿಸುವ ಪರಿಯೆಂತೊ ? ಶಿವ ನಷ್ಟ, ಶಕ್ತಿ ನಷ್ಟ, ಈ ಉಭಯಸ್ಥಳವನರಿದಡೆ ಕೂಡಲಚೆನ್ನಸಂಗಾ ನೀನೆಂಬೆನು.
--------------
ಚನ್ನಬಸವಣ್ಣ
ಗುರುಸ್ಥಲ ಲಿಂಗಸ್ಥಲ ಜಂಗಮಸ್ಥಲ. ಈ ತ್ರಿವಿಧಭೇದವ ವಿವರಿಸಿ ಹೇಳೆಹೆ ಕೇಳಿರಣ್ಣಾ. ಗುರುಸ್ಥಲ ವೇದಾಂತ, ಲಿಂಗಸ್ಥಲ ಸಿದ್ಧಾಂತ, ಜಂಗಮಸ್ಥಲ ಪ್ರಸಿದ್ಧಾಂತ. ಇಂತೀ ತ್ರಿವಿಧಭೇದ ಐಕ್ಯವಹ ತೆರ ಸಮರ್ಪಣವೆಂತಾದುದಣ್ಣಾ ? ಗುರುಸ್ಥಲ ಸಂಗನಬಸವಣ್ಣನಾದ, ಲಿಂಗಸ್ಥಲ ಚೆನ್ನಬಸವಣ್ಣನಾದ. ಜಂಗಮಸ್ಥಲ ಪ್ರಭುವಾಗಿ ಬಂದ. ಬಂದ ಅಂದವ ತಿಳಿದು ನೋಡು. ಗುರುಲಿಂಗಜಂಗಮವೆಂಬ ಸಂದೇಹದಲ್ಲಿ ನಿಂದು, ಆನಂದಿಸುತ್ತಿರ್ಪ ಭಾವದ ಬಳಲಿಕೆಯ ಅಣ್ಣಗಳು ಕೇಳಿರೊ. ಕಾಯ ಬಸವಣ್ಣನಾದ, ಜೀವ [ಚೆನ್ನ]ಬಸವಣ್ಣನಾದ. ಅದರ ಅರಿವು ಕಳೆ ಪರಿಪೂರ್ಣ ಪರಂಜ್ಯೋತಿ ಪ್ರಭುವಾದ. ಇಂತೀ ತ್ರಿವಿಧಭೇದವ ಕೊಟ್ಟು ಬಂದು, ಭಕ್ತಿ ಮುಕ್ತಿ ವಿರಕ್ತಿಯಿಂದ ಮಹಾಮನೆಯಲ್ಲಿ ಮಾಡಿ ಕೆಟ್ಟ ಬಸವಣ್ಣ. ಹೇಳಿ ಕೆಟ್ಟ ಚೆನ್ನಬಸವಣ್ಣ, ಉಂಡೆಹೆನೆಂದು ಗರ್ವದಲ್ಲಿ ಕುಳಿತು ಕೆಟ್ಟ ಪ್ರಭುದೇವರು. ಅಂತುಕದಲ್ಲಿರ್ದ ಸಂಗನಬಸವಣ್ಣ, ಸಂಕಲ್ಪದಲ್ಲಿರ್ದ ಚೆನ್ನಬಸವಣ್ಣ. ಸಂದೇಹದಂಗವ ತಾಳಿರ್ದ ಪ್ರಭುದೇವರು. ಇಂತಿವರಂಗದಲ್ಲಿ ಲಿಂಗವುಂಟೆಂಬೆನೆ, ಜ್ಞಾನಕ್ಕೆ ದೂರ. ಇಲ್ಲವೆಂಬೆನೆ ಸಮಯಕ್ಕೆ ದೂರ. ಇಂತೀ ಉಭಯದ ಸಂದನಳಿದರೆಂಬೆನೆ, ಪ್ರಭು ಸಂದೇಹಿಯಾದ. ಇವರೆಲ್ಲರೂ ಅಡುವ ಲಂದಣಗಿತ್ತಿಯ ಮನೆಯ ಉಂಬಳಿಕಾರರಾದರು. ಇದು ಸಂದೇಹವಿಲ್ಲ. ಗುರುವೆಂದಡೆ ಸರ್ವರಿಗೆ ಬೋಧೆಯ ಹೇಳಿ, ಕರ್ಮಕಾಂಡಿಯಾದ. ಲಿಂಗವೆಂದಡೆ ಯುಗಯುಗಂಗಳಿಗೊಳಗಾದ, ಪ್ರಳಯಕ್ಕರುಹನಾದ. ಪ್ರಭುದೇವರು ಜಂಗಮವೆಂಬೆನೆ ಗೆಲ್ಲ ಸೋಲಕ್ಕೆ ಹೋರಿ, ಕಾಯದೊಳು ನಾನಿಲ್ಲವೆಂದು ಚೌವಟಗೊಳಗಾದ. ಎಲ್ಲಿಯೂ ಕಾಣೆ, ಲೀಲೆಗೆ ಹೊರಗಾದವನ. ಭಕ್ತಿ ಮುಕ್ತಿ ವಿರಕ್ತಿ ಲೇಪವಾಗಿ, ನಾನೆನ್ನದೆ ಇದಿರೆನ್ನದೆ, ಜಗದಲ್ಲಿ ತಾನೇನೂ ಎನ್ನದಿರ್ಪುದೆ ತ್ರಿವಿಧ ಸಮರ್ಪಣ ಆಚಾರ. ಭಾವರಹಿತ ವಿಕಾರ, ನಿರುತ ಪರಿಪೂರ್ಣನಾದೆಯಲ್ಲಾ, ನಿಃಕಳಂಕ ಮಲ್ಲಿಕಾರ್ಜುನಾ.
--------------
ಮೋಳಿಗೆ ಮಾರಯ್ಯ
ಪ್ರಾಣಲಿಂಗಿಗಳೆಂದು ನುಡಿವ ನಾಚಿಕೆಯಿಲ್ಲದ ಅಣ್ಣಗಳು ಭಾವಿಸಿರಯ್ಯಾ. ತನು ಸೋಂಕುವುದಕ್ಕೆ ಮೊದಲೆ, ಮನ ಸೋಂಕಿತ್ತಲ್ಲಾ. ತನು ಹಿಂಗಿ ಅರ್ಪಿಸುವ ಠಾವಿನ್ನೆಲ್ಲಿಯದೊ? ಅಂಗವರಿದು ಮನವರಿದುದಿಲ್ಲ. ಅಂಗಲಿಂಗ ಅರ್ಪಿತವೆಂತಾಯಿತ್ತೊ? ಇಂತೀ ಭಂಗಿತರ ಕಂಡು ಹಿಂಗಿದೆನಯ್ಯಾ, ನಿಃಕಳಂಕ ಮಲ್ಲಿಕಾರ್ಜುನಾ.
--------------
ಮೋಳಿಗೆ ಮಾರಯ್ಯ
ನಿರ್ಗಮನಿಯಾದ ಶರಣಂಗೆ ಸಂಧಾನವಲ್ಲದೆ ಗಮನಿಯಾದ ಶರಣಂಗೆ ಅನುಗೊಳದೆಂಬ ಅಣ್ಣಗಳು ನೀವು ಕೇಳಿರೇ. ಸೂರ್ಯನು ರಥವನೇರಿ ಪದಾರ್ಥಂಗಳ ಚಬುಕುಮಾಡಿ ಮನೋವೇಗದಿಂ ಪಶ್ಚಿಮ ಸಮುದ್ರಕ್ಕೆ ದಾಳಿಯಿಡಲು ರವಿಕಿರಣಂಗಳು ಹಿಂದುಳಿದಿಪ್ಪವೇ? ಅದು ಕಾರಣ- ಪುಷ್ಪವಿದ್ದಲ್ಲಿ ಪರಿಮಳವಿಪ್ಪುದು. ಅಂಗವಿದ್ದಲ್ಲಿ ಲಿಂಗವಿಪ್ಪುದು. ಲಿಂಗವಿದ್ದಲ್ಲಿ ಆ ಲಿಂಗದ ಮೇಲೆ ಮನವಿಪ್ಪುದು. ಲಿಂಗದ ಮೇಲೆ ಮನವಿಪ್ಪಲ್ಲಿಯೇ ಶರಣ. ಆ ಶರಣ ನಡೆದಲ್ಲಿಯೇ ಉರಿವಗ್ನಿಯ ಮೇಲೆ ತಂಗಾಳಿ ಬೀಸಿದಂತೆ. ತ್ರಿಪುಟಿಯ ಮೇಲೆ ಚಿದ್ಭೆಳಗು ಓಲಾಡುತ್ತಿದೆ. ಆ ಶರಣ ನೋಡುವಲ್ಲಿಯೇ ಪ್ರಣವದ ಬಳ್ಳಿ ಮನವ ಸುತ್ತುತ್ತಿದೆ. ಆ ಶರಣ ನೋಡುವಲ್ಲಿಯೇ ಪಂಚವರ್ಣಂಗಳ ಸ್ವರೂಪು ಲಿಂಗಾರ್ಪಿತವಾಗುತ್ತಿದೆ. ಶರಣ ಕುಂಬ್ಥಿಸುವಲ್ಲಿಯೇ ಓಂಕಾರ ಒಡಗೂಡುವುದಯ್ಯ. ಶರಣ ರೇಚಿಸುವಲ್ಲಿಯೇ ಪಂಚಾಕ್ಷರಂಗಳು ಎಡೆಯಾಡುತ್ತಿವೆ. ಶರಣ ಸುಳಿವಲ್ಲಿಯೇ ಹಲವು ಪ್ರಕಾರದ ವಸ್ತುಗಳ ತನುಸೋಂಕು ಲಿಂಗಮನವ ತುಂಬುತ್ತಿದೆ. ಇದು ಕಾರಣ ತೋಂಟದಾರ್ಯನ ಕರುಣಪ್ರಸಾದಮಂ ಪಡೆದು ತತ್ವಸ್ವರೂಪ ಧ್ಯಾನ ಧಾರಣ ಅರ್ಪಿತಾವಧಾನವನರಿದ ಶರಣಂಗೆ ಗಮನಾಗಮನವೆಂಬುಭಯವುಂಟೇ?, ಘನಲಿಂಗಿಯ ಮೋಹದ ಚೆನ್ನಮಲ್ಲಿಕಾರ್ಜುನಾ.
--------------
ಘನಲಿಂಗಿದೇವ
ಶೀಲಶೀಲವೆಂಬ ಅಣ್ಣಗಳು ನೀವು ಕೇಳಿರೊ: ಕಾಮ ಒಂದನೆಯ ಭವಿ, ಕ್ರೋಧ ಎರಡನೆಯ ಭವಿ, ಲೋಭ ಮೂರನೆಯ ಭವಿ, ಮೋಹ ನಾಲ್ಕನೆಯ ಭವಿ, ಮದ ಐದನೆಯ ಭವಿ, ಮತ್ಸರ ಆರನೆಯ ಭವಿ. ಇಂತೀ ಷಡ್ವಿಧಭವಿಯ ತಮ್ಮ ಎದೆಯೊಳಗೆ ಇಂಬಿಟ್ಟುಕೊಂಡು ಅಂಗದ ಮೇಲೆ ಅವರಿಗೆ ಲಿಂಗವುಂಟೊ ? ಇಲ್ಲವೊ ? ಎಂಬ ಜಗಭಂಡರು ನೀವು ಕೇಳಿರೊ: ಅಚ್ಚಪ್ರಸಾದಿ ನಿಚ್ಚಪ್ರಸಾದಿ ! ಜಲವನೆ ಹೊಕ್ಕು ಕನ್ನವನಿಕ್ಕಿ ಅಗ್ಗಣಿಯ ತಂದು ಮಜ್ಜನಕ್ಕೆ ನೀಡುವ ಹಗಲುಗಳ್ಳರ ಮೆಚ್ಚುವನೆ ಕೂಡಲಚೆನ್ನಸಂಗಮದೇವ ?
--------------
ಚನ್ನಬಸವಣ್ಣ
ಅದ್ವೈತವನೋದಿ ಎರಡಳಿದೆವೆಂಬ ಅಣ್ಣಗಳು ನೀವು ಕೇಳಿರೆ. ಅದ್ವೈತಿಯಾದಡೆ ತನುವಿಕಾರ, ಮನದ ಸಂಚಲ, ಭಾವದ ಭ್ರಾಂತು, ಅರಿವಿನ ಮರಹು, ಇಂತೀ ಚತುರ್ವಿಧಂಗಳಲ್ಲಿ ವಿಧಿನಿಷೇಧಂಗಳಳಿದು, ಚಿದ್ಬ್ರಹ್ಮದೊಳವಿರಳಾತ್ಮಕವಾದುದು ಅದ್ವೈತ. ಅಂತಪ್ಪ ವಿಧಿನಿಷೇಧಂಗಳು ಹಿಂಗದೆ, ಲಿಂಗವನರಿಯದೆ, ವಾಗದ್ವೈತದಿಂದ ನುಡಿದು ಅದ್ವೈತಿ ಎನಿಸಿಕೊಂಬುದೆ ದ್ವೈತ. ಇಂತಪ್ಪ ದ್ವೈತಾದ್ವೈತಂಗಳಿಗೆ ಸಿಲುಕದ, ಹರಿಹರಬ್ರರ್ಹದಿಗಳನರಿಯದ ವೇದಶಾಸ್ತ್ರ ಆಗದು ಪುರಾಣ ಇತಿಹಾಸ ರಹಸ್ಯಛಂದಸ್ಸು ಅಲಂಕಾರ ನಿಘಂಟು ಶಬ್ದತರ್ಕಂಗಳೆಂಬ ಕುತರ್ಕಂಗಳಿಗೆ ನಿಲುಕದ ನಿತ್ಯನಿಜೈಕ್ಯ ನಿರುಪಮಸುಖಿಯಾಗಿ, ತಾನಿದಿರೆಂಬ ಭಿನ್ನಭಾವವಿಲ್ಲದ ಸ್ವಯಾದ್ವೈತಿ ತಾನೆ ಸೌರಾಷ್ಟ್ರ ಸೋಮೇಶ್ವರ.
--------------
ಆದಯ್ಯ
ಇನ್ನಷ್ಟು ... -->