ಅಥವಾ

ಒಟ್ಟು 23 ಕಡೆಗಳಲ್ಲಿ , 7 ವಚನಕಾರರು , 19 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಶಿವಶಿವಾ ದ್ವಿಜರೆಂಬ ಪಾತಕರು ನೀವು ಕೇಳಿ ಭೋ ! ನೀವು ಎಲ್ಲಾ ಜಾತಿಗೂ ನಾವೇ ಮಿಗಿಲೆಂದು, `ವರ್ಣಾನಾಂ ಬ್ರಾಹ್ಮಣೋ ಗುರುಃ' ಎಂದು, ಬಳ್ಳಿಟ್ಟು ಬಾಸ್ಕಳಗೆಡವುತಿಪ್ಪಿರಿ ನೋಡಾ. `ಆದಿ ಬಿಂದುದ್ಭವೇ ಬೀಜಂ' ಎಂಬ ಶ್ರುತಿಯಿಂ ತಿಳಿದು ನೋಡಲು ಆದಿಯಲ್ಲಿ ನಿಮ್ಮ ಮಾತಾಪಿತರ ಕೀವು ರಕ್ತದ ಮಿಶ್ರದಿಂದ ನಿಮ್ಮ ಪಿಂಡ ಉದಯಿಸಿತ್ತು. ಆ ಕೀವು ರಕ್ತಕ್ಕೆ ಆವ ಕುಲ ಹೇಳಿರೆ ? ಅದೂ ಅಲ್ಲದೆ ಪಿಂಡ ಒಂಬತ್ತು ತಿಂಗಳು ಒಡಲೊಳಗೆ ಕುರುಳು, ಮಲಮೂತ್ರ, ಕೀವು, ದುರ್ಗಂಧ, ರಕ್ತ ಖಂಡಕಾಳಿಜ ಜಂತುಗಳೊಳಗೆ, ಪಾತಾಳದೊಳಗಣ ಕ್ರಿಮಿಯಂತೆ ಹೊದಕುಳಿಗೊಂಬಂದು ನೀನಾವ ಕುಲ ಹೇಳಿರೆ ? ಅದುವಲ್ಲದೆ ಮೂತ್ರದ ಕುಳಿಯ ಹೊರವಡುವಾಗ, ಹೊಲೆ ಮುಂತಾಗಿ ಮುದುಡಿ ಬಿದಲ್ಲಿ, ಹೆತ್ತವಳು ಹೊಲತಿ, ಹುಟ್ಟಿದ ಮಗುವು ಹೊಲೆಯನೆಂದು ನಿಮ್ಮ ಕುಲಗೋತ್ರ ಮುಟ್ಟಲಮ್ಮದೆ, ಹನ್ನೆರಡು ದಿನದೊಂದು ಪ್ರಾಯಶ್ಚಿತ್ತವನಿಕ್ಕಿಸಿಕೊಂಡು ಬಂದು ನಿನ್ನಾವ ಕುಲ ಹೇಳಿರೆ ? ಮುಂಜಿಗಟ್ಟದ ಮುನ್ನ ಕೀಳುಜಾತಿ, ಮುಂಜಿಗಟ್ಟಿದ ಬಳಿಕ ಮೇಲುಜಾತಿಗಳು ಎಂಬ ಪಾತಕರು ನಿಮ್ಮ ನುಡಿ ಕೊರತೆಗೆ ನೀವು ನಾಚಬೇಡವೆ ? ನೀವು ನಾಚದಿರ್ದಡೆ ನಾ ನಿಮ್ಮ ಕುಲದ ಬೇರನೆತ್ತಿ , ತಲೆಕೆಳಗು ಮಾಡಿ ತೋರಿಹೆನು. ನಾನು ಉತ್ತಮದ ಬ್ರಾಹ್ಮಣರೆಂಬ ನಿಮ್ಮ ದೇಹ ಬ್ರಹ್ಮನೊ ? ನಿಮ್ಮ ಪ್ರಾಣ ಬ್ರಹ್ಮನೊ ? ಆವುದು ಬ್ರಾಹ್ಮಣ್ಯ ? ಬಲ್ಲಡೆ ಬಗುಳಿರಿ ! ಅರಿಯದಿರ್ದಡೆ ಕೇಳಿರಿ. ದೇಹ ಕುಲಜನೆಂದಡೆ ಚರ್ಮಕ್ಕೆ ಕುಲವಿಲ್ಲ, ಖಂಡಕ್ಕೆ ಕುಲವಿಲ್ಲ, ನರವಿಂಗೆ ಕುಲವಿಲ್ಲ, ರಕ್ತಕ್ಕೆ ಕುಲವಿಲ್ಲ, ಕೀವಿಂಗೆ ಕುಲವಿಲ್ಲ. ಕರುಳಿಂಗೆ ಕುಲವಿಲ್ಲ, ಮಲಮೂತ್ರಕ್ಕಂತೂ ಕುಲವಿಲ್ಲ, ಒಡಲೆಂಬುದು ಅಪವಿತ್ರವಾಯಿತ್ತು, ಕುಲವೆಲ್ಲಿಯದೊಡಲಿಂಗೆ ? ಅವಂತಿರಲಿ ; ಇನ್ನು ನಿಮ್ಮ ಪ್ರಾಣಕ್ಕೆ ಕುಲವುಂಟೆಂದಡೆ. ಪ್ರಾಣ ದಶವಾಯುವಾದ ಕಾರಣ, ಆ ವಾಯು ಹಾರುವನಲ್ಲ. ಅದುವಲ್ಲದೆ ನಿಮ್ಮ ಒಡಲನಲಗಾಗಿ ಇರಿವ ಕಾಮ ಕ್ರೋಧ ಲೋಭ ಮೋಹ ಮದ ಮತ್ಸರಂಗಳು ಉತ್ತಮ ಕುಲವೆಂಬ ಅವು ಮುನ್ನವೆ ಪಾಪಕಾರಿಗಳಾದ ಕಾರಣ, ಅವಕ್ಕೆ ಕುಲವಿಲ್ಲ. ನಿಲ್ಲು ! ಮಾಣು ! ನಿಮ್ಮೊಳಗಣ ಸಪ್ತವ್ಯಸನಂಗಳು ಉತ್ತಮ ಕುಲವೆಂಬ ಅವು ಮುನ್ನವೆ ದುರ್ವ್ಯಸನಂಗಳಾದ ಕಾರಣ, ಅದಕೆಂದೂ ಕುಲವಿಲ್ಲ. ನಿಲ್ಲು ! ಮಾಣು ! ನಿಮ್ಮ ಅಷ್ಟಮದಂಗಳು ಉತ್ತಮ ಕುಲವೆಂಬ ಅವು ನಿನ್ನ ಸುರೆಯ ಸವಿದ ಕೋಡಗದ ಹಾಂಗೆ ನಿಮ್ಮ ಗಾಣಲೀಯವಾದ ಕಾರಣ, ಅವು ಕುಲವಿಲ್ಲ. ನಿಲ್ಲು ! ಬಗುಳದಿರು ! ಇನ್ನು ಒಡಲ ತಾಪತ್ರಯಂಗಳು ಉತ್ತಮ ಕುಲವೆಂಬ ಅವು ನಿಮ್ಮ ಇರಿದಿರಿದು ಸುಡುವ ಒಡಗಿಚ್ಚುಗಳು. ಅವು ಕುಲವಿಲ್ಲ. ನಿಲ್ಲು ! ಮಾಣು ! ನಿಮ್ಮೊಡಲ ಮುಚ್ಚಿದ ಮಲಮೂತ್ರಂಗಳ ಕುಲವುಂಟೆ ? ಅವು ಅರಿಕೆಯಲಿ ಮಲಮೂತ್ರಂಗಳಾದ ಕಾರಣ, ಅವಕ್ಕೆ ಕುಲವಿಲ್ಲ ನಿಲ್ಲು ! ಮಾಣು ! ಇನ್ನು ಉಳಿದ ಅಂತಃಕರಣಂಗಳಿಗೆ ಉತ್ತಮ ಕುಲವೆಂಬಿರಿ. ಅವ ನೀವು ಕಾಣಿರಿ, ನಿಮ್ಮನವು ಕಾಣವು. ಅದು ಕಾರಣ ಬಯಲಭ್ರಮೆಗೆ ಉತ್ತಮ ಕುಲವುಂಟೆ ? ಇಲ್ಲ ! ಇಲ್ಲ !! ನಿಲ್ಲು ! ಮಾಣು ! ಇಂತು ನಿಮ್ಮ ಪಂಚಭೂತ ಸಪ್ತಧಾತು ಪಂಚೇಂದ್ರಿಯಂಗಳು ಉತ್ತಮ ಕುಲವೆಂಬ ಅವು ಎಲ್ಲಾ ಜೀವರಾಶಿಗೂ ನಿಮಗೂ ಒಂದೇ ಸಮಾನ. ಅದೆಂತೆಂದಡೆ : ಸಪ್ತಧಾತುಸಮಂ ಪಿಂಡಂ ಸಮಯೋನಿಸಮುದ್ಭವಂ | ಆತ್ಮಾಜೀವಸಮಾಯುಕ್ತಂ ವರ್ಣಾನಾಂ ಕಿಂ ಪ್ರಯೋಜನಂ || ಎಂದುದಾಗಿ, ನಿಮ್ಮ ದೇಹಕ್ಕೆ ಕುಲವಾವುದು ಹೇಳಿರೆ ! ಇದಲ್ಲದೆ ಆತ್ಮನು ದೇಹವ ಬಿಟ್ಟು, ಒಂದು ಘಳಿಗೆ ತೊಲಗಿರಲು ಆ ದೇಹ ಹಡಿಕೆಯಾಗಿ ಹುಳಿತು, ನಾಯಿ ನರಿ ತಿಂಬ ಕಾರಣ ನಿಮ್ಮ ದೇಹ ಅಪವಿತ್ರ ಕಾಣಿರೆ ! ಇಂತಪ್ಪ ಅಪವಿತ್ರ ಕಾರ್ಯಕ್ಕೆ ಕುಲವಿಲ್ಲ. ಆ ಕಾರ್ಯಕ್ಕೆ ಕುಲವುಂಟೆಂದಡೆ ಮೇಲುಜಾತಿಯ ದೇಹದೊಳಗೆ ಹಾಲುವುಳ್ಳಡೆ ಕೀಳುಜಾತಿಯ ದೇಹದೊಳಗೆ ರಕ್ತವುಳ್ಳಡೆ ಅದು ಕುಲವಹುದು ! ಅಂಥಾ ಗುಣ ನಿಮಗಿಲ್ಲವಾಗಿ, ಎಲ್ಲಾ ಜೀವರಾಶಿಯ ದೇಹವು, ನಿಮ್ಮ ದೇಹವು ಒಂದೇ ಸಮಾನವಾದ ಕಾರಣ ನಿಮಗೆ ಕುಲವಿಲ್ಲ ! ನಿಲ್ಲು ! ಮಾಣು ! ಒಡಲು ಕರಣಾದಿಗಳು ಕುಲವಿಲ್ಲದೆ ಹೋದಡೂ ಎಲ್ಲವೂ ಅರಿವ ಚೈತನ್ಯಾತ್ಮಕನೆ, ಸತ್ಕುಲಜನೆ ಆತ್ಮನು, ಆವ ಕುಲದೊಳಗೂ ಅಲ್ಲ. ಶರೀರ ಬೇರೆ, ಆತ್ಮ ಬೇರೆ. ಅದೆಂತೆಂದಡೆ : ಭೂದೇವಮೃದ್ಭಾಂಡಮನೇಕ ರೂಪಂ ಸುವರ್ಣಮೇಕಂ ಬಹುಭೂಷಣಾನಾಂ | ಗೋಕ್ಷೀರಮೇಕಂ ಬಹುವರ್ಣಧೇನುಃ | ಶರೀರಭೇದಸ್ತೆ ್ವೀಕಃ ಪರಮಾತ್ಮಾ || ಎಂದುದಾಗಿ, ಶರೀರಂಗಳು ಅನಂತ, ಆತ್ಮನೊಬ್ಬನೆ. ಅದು ಕಾರಣ, ಆ ಆತ್ಮನು ಆವ ಕುಲದಲ್ಲೂ ಅಲ್ಲ. ಇನ್ನು ಆವ ಠಾವಿನಲ್ಲಿ ನಿಮ್ಮ ಕುಲದ ಪ್ರತಿಷ್ಠೆಯ ಮಾಡಿ ತೋರಿವಿರೊ ? ದೇಹದ ಮೃತ್ತಿಕೆ ಆತ್ಮ ನಿರಾಕಾರನೆನುತ್ತಿರಲು, ಇನ್ನಾವ ಪರಿಯಲ್ಲಿ ನಾ ಉತ್ತಮ ಕುಲಜರೆಂಬಿರೊ ? ಜೀವಶ್ಶಿವೋ ಶಿವೋ ಜೀವಸ್ಸಜೀವಃ ಕೇವಲಃ ಶಿವಃ | ಪಾಶಬದ್ಧಸ್ಥಿತೋ ಜೀವಃ ಪಾಶಮುಕ್ತಃ ಸದಾಶಿವಃ || ಎಂಬ ಶ್ರುತಿಯಂ ತಿಳಿದು ನೋಡಲು, ನೀವೆಲ್ಲಾ ಪಾಶಬದ್ಧ ಜೀವಿಗಳಾಗುತ್ತ ಇರಲು, ನಿಮಗೆಲ್ಲಿಯ ಉತ್ತಮ ಕುಲ ? ಪಾಶಮುಕ್ತರಾದ ಎಮ್ಮ ಶಿವಭಕ್ತರೆ ಕುಲಜರಲ್ಲದೆ ನಿಮಗೆ ಉತ್ತಮ ಕುಲ ಉಂಟಾದಡೆ, ನಿಮ್ಮ ದೇಹದೊಳಗೆ ಹೊರಗೆ ಇಂಥಾ ಠಾವೆಂದು ಬೆರಳುಮಾಡಿ ತೋರಿ ! ಅದೂ ಅಲ್ಲದೆ ಒಂದು ಪಕ್ಷಿಯ ತತ್ತಿಯೊಳಗೆ ಹಲವು ಮರಿ ಹುಟ್ಟಿದಡೆ ಒಂದರ ಮರಿಯೋ, ಹಲವು ಪಕ್ಷಿಯ ಮರಿಯೋ ? ತಿಳಿದು ನೋಡಿದಡೆ ಅದಕ್ಕೆ ಬೇರೆ ಬೇರೆ ಪಕ್ಷಿಗಳೆಂಬ ಕುಲವಿಲ್ಲ. ಅಹಂಗೆ ಒಬ್ಬ ಬ್ರಹ್ಮನ ಅಂಡವೆಂಬ ತತ್ತಿಯೊಳಗೆ ಸಕಲ ಜೀವರಾಶಿ ಎಲ್ಲಾ ಉದಯಿಸಿದವು. ಅದೆಂತೆಂದಡೆ : ಪೃಥಿವ್ಯಾಕಾಶಯೋರ್ಭಾಂಡಂ ತಸ್ಯಾಂಡಂ ಜಾಯತೇ ಕುಲಂ | ಅಂತ್ಯಜಾತಿದ್ರ್ವಿಜಾತಿರ್ಯಾ ಏಕಯೋನಿಸಹೋದರಾ || ಎಂದುದಾಗಿ, ಇರುಹೆ ಮೊದಲು, ಆನೆ ಕಡೆಯಾದ ಸಚರಾಚರವೆಲ್ಲವು ಒಬ್ಬ ಬ್ರಹ್ಮನ ಅಂಡದೊಳಗೆ ಹುಟ್ಟಿ, ಏಕಯೋನಿ ಸಹೋದರರೆಂದು ಪ್ರತಿಷ್ಠಿಸುತ್ತಿರಲು, ನಿಮಗೆಲ್ಲಿಯ ಕುಲವೊ ? ಶಿವಭಕ್ತರೆ ಉತ್ತಮ ಕುಲಜರೆಂದು, ಮಿಕ್ಕಿನವರೆಲ್ಲಾ ಕೀಳುಜಾತಿ ಎಂಬುದನು ಓದಿ ಬರಿದೊರೆಯಾದಡು ನಾನು ನಿಮಗೆ ಹೇಳಿಹೆನು ಕೇಳಿ ಶ್ವಪಚೋಪಿ ಮುನಿಶ್ರೇಷ್ಠಶ್ಶಿವ ಸಂಸ್ಕಾರಸಂಯುತಃ | ಶಿವಸಂಸ್ಕಾರಹೀನಶ್ಚ ಬ್ರಾಹ್ಮಣಃ ಶ್ವಪಚಾಧಮಃ || ಎಂಬ ಶ್ರುತಿಗೆ ಇದಿರುತ್ತರವ ಕೊಟ್ಟಡೆ, ಬಾಯಲ್ಲಿ ಕಾಷ್ಟವ ಮೂಡುವುದಾಗಿ ನೀವೇ ಕೀಳುಜಾತಿಗಳು, ಅರಿದ ಶಿವಭಕ್ತರು ಸತ್ಕುಲಜರೆಂದು ಸುಮ್ಮನಿರಿರೋ. ಅಲ್ಲದ ಅಜ್ಞಾನರಾದುದೆಲ್ಲಾ ಒಂದು ಕುಲ. ಸುಜ್ಞಾನರಾದುದೆಲ್ಲಾ ಒಂದು ಕುಲವೆಂದು ಶಾಸ್ತ್ರಗಳು ಹೇಳುತ್ತಿದಾವೆ. ಅದೆಂತೆಂದಡೆ : ಆಹಾರನಿದ್ರಾಭಯಮೈಥುನಂ ಚ ಸಾಮಾನ್ಯಮೇತತ್ಪಶುಬ್ಥಿರ್ನರಾಣಾಂ | ಜ್ಞಾನಂ ಹಿ ತೇಷಾಂ ಅದ್ಥಿಕೋ ವಿಶೇಷಃ ಜ್ಞಾನೇನ ಹೀನಾಃ ಪಶುಬ್ಥಿಃ ಸಮಾನಾಃ || ಎಂದುದಾಗಿ, ಅಜ್ಞಾನತಂತುಗಳು ನೀವೆಲ್ಲರೂ ಕರ್ಮಪಾಶಬದ್ಧರು. ನಿಮಗೆಲ್ಲಿಯದೊ ಸತ್ಕುಲ ? ಇದು ಅಲ್ಲದೆ ನಿಮ್ಮ ನುಡಿಯೊಡನೆ ನಿಮಗೆ ಹಗೆಮಾಡಿ ತೋರಿಹೆನು. ಕೇಳೆಲವೊ ನಿಮಗೆ ಕುಲವು ವಶಿಷ್ಟ, ವಿಶ್ವಾಮಿತ್ರ, ಭಾರದ್ವಾಜ, ಕೌಂಡಿಲ್ಯ, ಕಾಶ್ಯಪನೆಂಬ ಋಷಿಗಳಿಂದ ಬಂದಿತ್ತೆಂಬಿರಿ. ಅವರ ಪೂರ್ವವನೆತ್ತಿ ನುಡಿದಡೆ ಹುರುಳಿಲ್ಲ. ಅವರೆಲ್ಲಾ ಕೀಳುಜಾತಿಗಳಾದ ಕಾರಣ, ನೀವೇ ಋಷಿಮೂಲವನು, ನದಿಮೂಲವನೆತ್ತಲಾಗದೆಂಬಿರಿ. ಇನ್ನು ನಿಮ್ಮ ನುಡಿ ನಿಮಗೆ ಹಗೆಯಾಯಿತ್ತೆಂದೆ ಕೇಳಿರೊ. ಆ ಋಷಿಗಳ ಸಂತಾನವಾಗಿ ನಿಮ್ಮ ಮೂಲವನೆತ್ತಿದಡೂ ಹುರುಳಿಲ್ಲ. ಅದಂತಿರಲಿ. ನಿಮ್ಮ ಕುಲಕೆ ಗುರುವೆನಿಸುವ ಋಷಿಗಳೆಲ್ಲರೂ ಲಿಂಗವಲ್ಲದೆ ಪೂಜಿಸರು, ವಿಭೂತಿ ರುದ್ರಾಕ್ಷಿಯನಲ್ಲದೆ ಧರಿಸರು, ಪಂಚಾಕ್ಷರಿಯನಲ್ಲದೆ ಜಪಿಸರು, ಜಡೆಯನ್ನಲ್ಲದೆ ಕಟ್ಟರು. ಹಾಗೆ ನೀವು ಲಿಂಗವ ಪೂಜಿಸಿ, ವಿಭೂತಿ ರುದ್ರಾಕ್ಷಿಯ ಧರಿಸಿ, ಪಂಚಾಕ್ಷರಿಯ ಜಪಿಸಿ, ಜಡೆಯ ಕಟ್ಟಿ, ಈಶ್ವರನ ಲಾಂಛನವ ಧರಿಸಿದಡೆ ನೀವು ಋಷಿಮೂಲದವರಹುದು. ಹೇಗಾದಡೂ ಅನುಸರಿಸಿಕೊಳಬಹುದು. ಅದು ನಿಮಗಲ್ಲದ ಮಟ್ಟಿಯನ್ನಿಟ್ಟು ವಿಷ್ಣುವಂ ಪೂಜಿಸಿ ಮುಡುಹಂ ಸುಡಿಸಿಕೊಂಡು, ಸಾಲಿಗ್ರಾಮ, ಶಕ್ತಿ, ಲಕ್ಷ್ಮಿ, ದುರ್ಗಿ ಎಂಬ ಕಿರುಕುಳದೈವವಂ ಪೂಜಿಸಿ, ನರಕಕ್ಕಿಳಿದು ಹೋಹರಾದ ಕಾರಣ, ನೀವೇ ಹೀನಜಾತಿಗಳು. ನಿಮ್ಮ ಋಷಿಮಾರ್ಗವ ವಿಚಾರಿಸಿ ನಡೆಯಿರಾಗಿ ನೀವೇ ಲಿಂಗದ್ರೋಹಿಗಳು. ಲಿಂಗವೆ ದೈವವೆಂದು ಏಕನಿಷ್ಠೆಯಿಂದಲಿರಿರಾಗಿ ನೀವೇ ಲಿಂಗದ್ರೋಹಿಗಳು. ಪಂಚಾಕ್ಷರಿಯ ನೆನೆಯಿರಾಗಿ ಮಂತ್ರದ್ರೋಹಿಗಳು. ರುದ್ರಾಕ್ಷಿಯ ಧರಿಸರಾದ ಕಾರಣ ನೀವು ಶಿವಲಾಂಛನ ದ್ರೋಹಿಗಳು. ಶಿವಭಕ್ತರಿಗೆರಗದ ಕಾರಣ ನೀವು ಶಿವಭಕ್ತರಿಗೆ ದ್ರೋಹಿಗಳು. ನಿಮ್ಮ ಮುಖವ ನೋಡಲಾಗದು. ಬರಿದೆ ಬ್ರಹ್ಮವನಾಚರಿಸಿ ನಾವು ಬ್ರಹ್ಮರೆಂದೆಂಬಿರಿ. ಬ್ರಹ್ಮವೆಂತಿಪ್ಪುದೆಂದರಿಯಿರಿ. ಬ್ರಹ್ಮಕ್ಕೂ ನಿಮಗೂ ಸಂಬಂಧವೇನೊ ? ಸತ್ಯಂ ಬ್ರಹ್ಮ ಶುಚಿಬ್ರ್ರಹ್ಮ ಇಂದ್ರಿಯನಿಗ್ರಹಃ | ಸರ್ವಜೀವದಯಾಬ್ರಹ್ಮ ಇತೈ ್ಯೀದ್ಬ್ರಹ್ಮ ಲಕ್ಷಣಂ | ಸತ್ಯಂ ನಾಸ್ತಿ ಶುಚಿರ್ನಾಸ್ತಿ ನಾಸ್ತಿ ಚೇಂದ್ರಿಯ ನಿಗ್ರಹಃ | ಸರ್ವಜೀವ ದಯಾ ನಾಸ್ತಿ ಏತಚ್ಚಾಂಡಾಲ ಲಕ್ಷಣಂ || ಬ್ರಹ್ಮಕ್ಕೂ ನಿಮಗೂ ಸಂಬಂಧವೇನೊ ? ಬ್ರಹ್ಮವೆ ನಿಃಕರ್ಮ, ನೀವೇ ಕರ್ಮಿಗಳು. ಮತ್ತೆಂತೊ `ಬ್ರಹ್ಮಂ ಚರೇತಿ ಬ್ರಹ್ಮಣಾಂ' ಎಂದು ಗಳವುತ್ತಿಹಿರಿ. ಗಾಯತ್ರಿಯ ಜಪಿಸಿ ನಾವು ಕುಲಜರೆಂಬಿರಿ. ಆ ಗಾಯತ್ರಿ ಕರ್ಮವಲ್ಲದೆ ಮುಕ್ತಿಗೆ ಕಾರಣವಿಲ್ಲ. ಅಂತು ಗಾಯತ್ರಿಯಿಂದ ನೀವು ಕುಲಜರಲ್ಲ. ವೇದವನೋದಿ ನಾವೇ ಬ್ರಹ್ಮರಾದೆವೆಂಬಿರಿ. ವೇದ ಹೇಳಿದ ಹಾಂಗೇ ನಡೆಯಿರಿ. ಅದೆಂತೆಂದಡೆ : ``ದ್ಯಾವಾಭೂವಿೂ ಜನಯನ್ ದೇವ ಏಕಃ'' ಎಂದೋದಿ ಮರದು, ವಿಷ್ಣು ವನೆ ಭಜಿಸುವಿರಿ. ನೀವೇ ವೇದವಿರುದ್ಧಿಗಳು. ``ವಿಶ್ವತೋ ಮುಖ ವಿಶ್ವತೋ ಚಕ್ಷು ವಿಶ್ವತೋ ಬಾಹು'' ಎಂದೋದಿ ಮತ್ತೆ , ``ಏಕೋ ರುದ್ರೋ ನ ದ್ವಿತೀಯಾಯ ತಸ್ಥೇ'' ಎಂದು ಮರದು, ಬೇರೊಬ್ಬ ದೈವ ಉಂಟೆಂದು ಗಳಹುತ್ತಿದಿರಿ. ನೀವೇ ವೇದದ್ರೋಹಿಗಳು. ``ಏಕಮೇವಾದ್ವಿತಿಯಂ ಬ್ರಹ್ಮ''ವೆಂದೋದಿ, ಕರ್ಮದಲ್ಲಿ ಸಿಕ್ಕಿದೀರಿ. ನೀವೇ ದುಃಕರ್ಮಿಗಳು. ``ಅಯಂ ಮೇ ಹಸ್ತೋ ಭಗವಾನ್, ಅಯಂ ಮೇ ಭಗವತ್ತರಃ |'' ಎಂದೋದಿ, ಅನ್ಯಪೂಜೆಯ ಮಾಡುತಿದೀರಿ. ನೀವೇ ಪತಿತರು. ``ಶಿವೋ ಮೇ ಪಿತಾ'' ಎಂದೋದಿ, ಸನ್ಯಾಸಿಗಳಿಗೆ ಮಕ್ಕಳೆಂದಿರಿ. ನೀವೇ ಶಾಸ್ತ್ರವಿರುದ್ಧಿಗಳು. ಸದ್ಯೋಜಾತದ್ಭವೇದ್ಭೂಮಿರ್ವಾಮದೇವಾದ್ಭವೇಜ್ಜಲಂ | ಅಘೋರಾದ್ವನ್ಹಿರಿತ್ಯುಕ್ತಸ್ತತ್ಪುರುಷಾದ್ವಾಯುರುಚ್ಯತೇ || ಈಶಾನ್ಯಾದ್ಗಗನಾಕಾರಂ ಪಂಚಬ್ರಹ್ಮಮಯಂ ಜಗತ್ | ಎಂದೋದಿ, ಸರ್ವವಿಷ್ಣುಮಯ ಎನ್ನುತ್ತಿಪ್ಪಿರಿ. ನಿಮ್ಮಿಂದ ಬಿಟ್ಟು ಶಿವದ್ರೋಹಿಗಳಾರೊ ? ``ಭಸ್ಮ ಜಲಮಿತಿ ಭಸ್ಮ ಸ್ಥಲಮಿತಿ ಭಸ್ಮ |'' ಎಂದೋದಿ, ಮರದು ವಿಭೂತಿಯ ನೀಡಲೊಲ್ಲದೆ ಮಟ್ಟಿಯಂ ನೀಡುವಿರಿ. ನಿಮ್ಮಿಂದ ಪತಿತರಿನ್ನಾರೊ ? ``ರುದ್ರಾಕ್ಷಧಾರಣಾತ್ ರುದ್ರಃ'' ಎಂಬುದನೋದಿ ರುದ್ರಾಕ್ಷಿಯಂ ಧರಿಸಲೊಲ್ಲದೆ, ಪದ್ಮಾಕ್ಷಿ ತೊಳಸಿಯ ಮಣಿಯಂ ಕಟ್ಟಿಕೊಂಬಿರಿ. ನಿಮ್ಮಿಂದ ಪಾಪಿಗಳಿನ್ನಾರೊ ? ``ಪಂಚಾಕ್ಷರಸಮಂ ಮಂತ್ರಂ ನಾಸ್ತೀ ತತ್ವಂ ಮಹಾಮುನೇ '' ಎಂಬುದನೋದಿ, ಪಂಚಾಕ್ಷರಿಯ ಜಪಿಸಲೊಲ್ಲದೆ, ಗೋಪಳಾ ಮಂತ್ರವ ನೆನವಿರಿ ಎಂತೊ ? ನಿಮ್ಮ ನುಡಿ ನಿಮಗೆ ವಿರುದ್ಧವಾಗಿರಲು, ನಿಮ್ಮ ಓದು ವೇದ ನಿಮಗೆ ವಿರುದ್ಧವಾಗಿರಲು, ನಿಮ್ಮ ಉತ್ತಮ ಕುಲಜರೆಂದು ವಂದಿಸಿದವರಿಗೆ ಶೂಕರ ಜನ್ಮದಲ್ಲಿ ಬಪ್ಪುದು ತಪ್ಪದು ನೋಡಿರೆ ! ವಿಪ್ರಾಣಾಂ ದರಿಶನೇ ಕಾಲೇ ಪಾಪಂ ಭುಂಜಂತಿ ಪೂಜಕಾಃ | ವಿಪ್ರಾಣಾಂ ವದನೇನೈವ ಕೋಟಿಜನ್ಮನಿ ಶೂಕರಃ || ಇಂತೆಂದುದಾಗಿ, ನಿಮ್ಮೊಡನೆ ಮಾತನಾಡಿದಡೆ ಪಂಚಮಹಾಪಾತಕಃ ನಿಮ್ಮ ಮುಖವ ನೋಡಿದಡೆ ಅಘೋರನರಕ. ಅದೆಂತೆಂದಡೆ : ಒಬ್ಬ ಹಾರುವನ ದಾರಿಯಲ್ಲಿ ಕಂಡದಿರೆ ಇರಿದು ಕೆಡಹಿದಲ್ಲದೆ ಹೋಗಬಾರದೆಂದು ನಿಮ್ಮ ವಾಕ್ಯವೆಂಬ ನೇಣಿಂದ ಹೆಡಗುಡಿಯ ಕಟ್ಟಿಸಿಕೊಳುತಿಪ್ಪಿರಿ. ಮತ್ತು ನಿಮ್ಮ ದುಶ್ಯರೀರತ್ರಯವನೆಣಿಸುವಡೆ ``ಅಣೋರಣೀಯಾನ್ ಮಹತೋ ಮಹೀಯಾನ್'' ಎಂಬುದ ನೀವೇ ಓದಿ, ಪ್ರಾಣಿಯಂ ಕೊಂದು ಯಾಗವನ್ನಿಕ್ಕಿ, ದೇವರ್ಕಳುಗಳಿಗೆ ಹೋಮದ ಹೊಗೆಯಂ ತೋರಿ, ಕೊಬ್ಬು ಬೆಳೆದ ಸವಿಯುಳ್ಳ ಖಂಡವನೆ ತಿಂದು, ಸೋಮಪಾನವೆಂಬ ಸುರೆಯನೆ ಕುಡಿದು, ನೊಸಲಕಣ್ಣ ತೋರುವಂತಹ ಶಿವಭಕ್ತನಾದಡೂ ನಿಂದಿಸಿ ನುಡಿವುತಿಪ್ಪಿರಿ. ನಿಮ್ಮೊಡನೆ ನುಡಿವಡೆ ಗುರುಲಿಂಗವಿಲ್ಲದವರು ನುಡಿವರಲ್ಲದೆ, ಗುರುಲಿಂಗವುಳ್ಳವರು ನುಡಿವರೆ ? ಇದು ಶ್ರುತ ದೃಷ್ಟ ಅನುಮಾನದಿಂದ ವಿಚಾರಿಸಿ ನೋಡಲು, ನೀವೇ ಪಂಚಮಹಾಪಾತಕರು. ಶಿವಭಕ್ತಿಯರಿಯದ ನರರು ಪೀನಕುರಿಗಳು. ನಿಮ್ಮಿಂದ ಏಳುಬೆಲೆ ಹೊರಗಾದ ಹೊಲೆಯನೆ ಉತ್ತಮ ಕುಲಜನೆಂದು ಮುಂಡಿಗೆಯ ಹಾಕಿದೆನು, ಎತ್ತಿರೊ ಸತ್ಯವುಳ್ಳಡೆ ! ಅಲ್ಲದಡೆ ನಿಮ್ಮ ಬಾಯಬಾಲವ ಮುಚ್ಚಿಕೊಳ್ಳಿರೆ. ಎಮ್ಮ ಶಿವಭಕ್ತರೇ ಅದ್ಥಿಕರು, ಎಮ್ಮ ಶಿವಭಕ್ತರೇ ಕುಲಜರು, ಎಮ್ಮ ಶಿವಭಕ್ತರೇ ಸದಾಚಾರಿಗಳು, ಎಮ್ಮ ಶಿವಭಕ್ತರೇ ಪಾಪರಹಿತರು, ಎಮ್ಮ ಶಿವಭಕ್ತರೇ ಸರ್ವಜೀವ ದಯಾಪಾರಿಗಳು, ಎಮ್ಮ ಶಿವಭಕ್ತರೇ ಸದ್ಯೋನ್ಮುಕ್ತರಯ್ಯಾ, ಘನಗುರು ಶಿವಲಿಂಗ ರಾಮನಾಥ.
--------------
ವೀರಶಂಕರದಾಸಯ್ಯ
ಜಗದೊಳಗೆ ಹುಟ್ಟಿ ಜಗದ ಹಂಗಿಗರಾಗಿ, ನಾವು ಜಂಗಮ, ನಾವು ಭಕ್ತರೆಂಬ ನುಡಿಗೆ ನಾಚರು ನೋಡಾ. ಅಪ್ಪುವಿನ ಘಟನ ಹೊತ್ತುಕೊಂಡು ಅನ್ನಪಾಂಗಳಿಗೆ ಅನುಸರಿಸಿ ನಡೆವುತ್ತ, ಹೊನ್ನು, ಹೆಣ್ಣು, ಮಣ್ಣನೀವವರ ಬಾಗಿಲ ಕಾಯ್ವ ಅಣ್ಣಗಳ ವೇಷಕ್ಕೆ ಶರಣಾರ್ಥಿ. ಅವರ ಆಶಾಪಾಶವ ಕಂಡು, ಹೇಸಿತ್ತೆನ್ನ ಮನವು. ಅದಂತಿರಲಿ, ಅದು ಬ್ರಹ್ಮನ ಹುಟ್ಟು, ವಿಷ್ಣುವಿನ ಸ್ಥಿತಿ, ರುದ್ರನ ಲಯಕ್ಕೊಳಗಾಗಿ ಹೋಯಿತ್ತು ಅಂತಲ್ಲ ಕೇಳಿರಣ್ಣ. ಜಂಗಮವಾದರೆ ಜಗದೊಳಗೆ ಹುಟ್ಟಿ, ಜಗದ ಹಂಗ ಹರಿದು, ಹೊನ್ನು, ಹೆಣ್ಣು, ಮಣ್ಣು ಕಣ್ಣಿಲೆ ನೋಡಿ ಕಾಮಿಸದೆ, ಮನದಲ್ಲಿ ನೆನೆಯದೆ, ಮಾಯವನುಣ್ಣದೆ, ಆಶೆಗೊಳಗಾಗದೆ, ವೇಷವ ಹೊರದೆ, ದೇಶದ ಮನುಜರ ಸುತ್ತಿದ ಪಾಶಕ್ಕೆ ಹೊರಗಾಗಿ ಸುಳಿವ ಜಂಗಮದ ಈಶನೆಂದೆ ಕಾಂಬೆ. ಆ ಜಂಗಮಕ್ಕೆ ಅರ್ಥ, ಪ್ರಾಣ, ಅಬ್ಥಿಮಾನವನೊಪ್ಪಿಸಿ, ತಪ್ಪದೆ ಒಡೆಯನೆಂದರಿದು ಮಾಡುವ ಭಕ್ತನ ಎಂತಿಪ್ಪನೆಂದು ಕಾಂಬೆ. ಇದನೆಂತಾದರೂ ಒಪ್ಪುಗೊಳ್ಳ ಎನ್ನ. ಬಸವಪ್ರಿಯ ಕೂಡಲಚೆನ್ನಸಂಗನ ಬಸವಣ್ಣನಲ್ಲಿ ಶರಣಗಣಂಗಳು.
--------------
ಹಡಪದ ಅಪ್ಪಣ್ಣ
ಜಗದಗಲ ಮುಗಿಲಗಲ ಮಿಗೆಯಗಲ ನಿಮ್ಮಗಲ ವಾಙõïಮಾನಸಾಗೋಚರವೆಂದು ಹೇಳುತ್ತೈದಾವೆ ವಾಕ್ಯಂಗಳು. ಅದಂತಿರಲಿ, ಐತಿಹಾಸಿಕರು ಪೌರಾಣಿಕರು ಆಗಮಿಕರು ಅರಿದರಾದಡೆ ದೃಶ್ಯನೆಂಬರೆ ಶಿವನನು? ಅದೃಶ್ಯನೆಂಬರೆ ಶಿವನನು? ವಾಙõïಮಾನಸಾಗೋಚರನೆಂಬರೆ ಶಿವನನು? `ಅತ್ಯತಿಷ್ಠದ್ದಶಾಂಗುಲಂ `ಏಕ ಏವ ಪುರುಷಃ ಎಂಬ ಶ್ರುತಿಯಿರಲು ಮತ್ತಚಿತ್ತನೆ ಶರಣನು? ಅಣುವಿನೊಳಗಣುವಾಗಿ, ಮಹತ್ತಿನೊಳಗೆ ಮಹತ್ತಾಗಿ, ಇಹಪರವೆಂಬ ಸಂದ ಹರಿದು, ಅಧ್ಯಕ್ಷತನಕ್ಕೆ ಕಾರಣಿಕನಾಗಿ ಇಹಲೋಕವೆ ಪರ, ಪರವೆ ಇಹಲೋಕ. ಅದು ಹೇಗೆಂದಡೆ: ನಿತ್ಯಂ ಲಿಂಗಾರ್ಚನಂ ಯಸ್ಯ ನಿತ್ಯಂ ಜಂಗಮಪೂಜನಂ ನಿತ್ಯಂ ಗುರುಪದಧ್ಯಾನಂ ನಿತ್ಯಂ [ನಿತ್ಯಂ]ನ ಸಂಶಯಃ ಎಂಬ ಆಗಮವಾಕ್ಯವನರಿದು, ಗುರುವಿಂಗೆ ತನುಮುಟ್ಟಿ, ತ್ರಿವಿಧಲಿಂಗಕ್ಕೆ ಮನಮುಟ್ಟಿ, ತ್ರಿವಿಧಜಂಗಮಕ್ಕೆ ಧನಮುಟ್ಟಿ, ತ್ರಿವಿಧ ನಿವೇದಿಸಿ, ಆ ಗುರುವಿಂ ಶುದ್ಧ[ಪ್ರಸಾದವ] ಆ ಲಿಂಗದಿಂ ಸಿದ್ಧನಪ್ರಸಾದವಫ ಅ ಜಂಗಮದಿಂ ಪ್ರಸಿದ್ಧ[ಪ್ರಸಾದವ]ನವಗ್ರಹಿಸಿ ಈ ಲಿಂಗಾರ್ಚನೆಯ ಸ್ವಾನುಭಾವದಿಂದೇಕವ ಮಾಡಿ ಅರ್ಚಿಸಲಲ್ಲಿ ಶರಣರು ಸ್ವತಂತ್ರರು. ಅಂಗದಾಸೆಯಲ್ಲಿ ಹರಿವುದ ಬಿಟ್ಟ ನಿಸ್ಸಂಗಿಗಳು. ಶ್ರೋತ್ರ ನೇತ್ರ ತ್ವಕ್ಕು ಜಿಹ್ವೆ ಘ್ರಾಣ ಪಂಚೇಂದ್ರಿಯಂಗಳ ಶಿವನ ಮುಖವೆಂದರಿದು ಅನ್ಯಸಂಗಂಗಳಿಗೆ ಎಳಸಿ ಬಳಸಿ ಬಣ್ಣಕರಪ್ಪರೆ ಶರಣರು? ಲಿಂಗಾರ್ಚನವಿಹೀನಸ್ತು ದ್ವಿಜೋ[s]ಪಿ ಶ್ವಪಚಾಧಮಃ ಲಿಂಗಾರ್ಚನಪರೋ ನಿತ್ಯಂ ಶ್ವಪಚೋ[s]ಪಿ ದ್ವಿಜೋತ್ತಮಃ ಎಂದುದಾಗಿ, ಅಮ್ಮ ಶರಣರಿಗೆ ಸರಿ ಉಂಟೆ ಲೋಕದೊಳಗೆ? ಶೂನ್ಯವೆನಿಸುವ ವಸ್ತುವ ರೂಹಿಂಗೆ ತಂದು ನೆರೆದು ತಾನೆ ರೂಪಾಗಬಲ್ಲ ಶರಣನು. ಆತನ ಮಹಾಮಹಿಮೆಗೆ ನಮೋ ನಮೋ ಎಂಬೆನು ಕಾಣಾ, ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರ.
--------------
ಉರಿಲಿಂಗಪೆದ್ದಿ
ನುಡಿದ ನುಡಿಗೆ ನಡೆ ಇಲ್ಲದಿದ್ದರೆ, ಮೃಡನ ಶರಣರು ಕಡೆನುಡಿದಲ್ಲದೆ ಮಾಣರು. ಎಮ್ಮ ಶರಣರು ಮತ್ತೆ ಹೊಡೆಗೆಡೆದು ಎನ್ನ ನುಡಿದು, ಹೊಡೆದು, ರಕ್ಷಿಸಿದಿರಲ್ಲ. ಎನ್ನ ಒಡೆಯರು ನೀವಹುದೆಂದು ಬಿಡದೆ ಅವರ ಬೇಡಿಕೊಂಬೆ. ಇದೀಗ ನಮ್ಮ ಶರಣರ ನಡೆನುಡಿ. ಅದಂತಿರಲಿ. ಅದಕೆ ನಮೋ ನಮೋ ಎಂಬೆ. ಈ ಪೊಡವಿಯೊಳು ಹುಟ್ಟಿದ ಮನುಜರೆಲ್ಲರು ಒಡೆಯರೆಂದು ಪೂಜೆಯಮಾಡಿ,ತುಡುಗುಣಿನಾಯಿಯಂತೆ ಒಕ್ಕುದ ಮಿಕ್ಕುದ ನೆಕ್ಕಿ, ತಮ್ಮ ಇಚ್ಛೆಗೆ ನುಡಿದರೆ ಒಳ್ಳಿದನೆಂಬರು. ಸತ್ಯವ ನುಡಿದರೆ ಸಾಯಲವನೆಲ್ಲಿಯ ಶರಣ ? ಇವನೆಲ್ಲಿಯ ಜಂಗಮ? ಇವರ ಕೂಡಿದ ಮನೆ ಹಾಳೆಂದು, ಕಂಡ ಕಂಡವರ ಕೂಡ ಹೇಳಿಯಾಡುವ, ಈ ಕಾಳುಮನುಜರನು ಲಿಂಗ ಜಂಗಮವೆಂದು ನುಡಿದು ಕೂಡಿಕೊಂಡು ಹೋದರೆ, ತನ್ನ ತನ್ನ ಪದಾರ್ಥವ ಹಿಡಿದರೆ, ಒಡೆಯನೆ ಬದುಕಿದೆ, ತ್ರಾಹಿ ಎಂಬ ಮೃಡಶರಣನು ಈ ಅಡ[ಗು] ಕಚ್ಚಿಕೊಂಡಿರುವ, ಹಡಿಕಿಮನುಜರನು ಸರಿಗಂಡಡೆ, ನಾಯಕ ನರಕದಲ್ಲಿಕ್ಕುವ, ನಮ್ಮ ಬಸವಪ್ರಿಯ ಕೂಡಲಚೆನ್ನಬಸವಣ್ಣಾ.
--------------
ಹಡಪದ ಅಪ್ಪಣ್ಣ
ಅಯ್ಯಾ, ಶಿವಭಕ್ತರು ನುಡಿವಲ್ಲಿ ಜಾಣತನದಿಂದ ನುಡಿವರು. ನೀಡುವಲ್ಲಿ ಭೇದದಿಂದ ನೀಡುವರು. ಕೊಡುವಲ್ಲಿ ಸತ್ಪಾತ್ರಕ್ಕೆ ಕೊಡುವರು. ಬಿಡುವಲ್ಲಿ ಶರಣಗೋಷಿ*ಯ ಬಿಡುವರು. ಪೊಡವಿಯೊಳಿವರ ಭಕ್ತರೆನ್ನಬಹುದೆ ? ಅದಂತಿರಲಿ, ಎನ್ನೊಡೆಯ ಬಸವಪ್ರಿಯನಡಿಗಳ ನೆನೆವ ಶರಣ ಲಿಂಗೈಕ್ಯರು ಮೆಡುವ ಪಡುಗ ಪಾದರಕ್ಷೆಯ ಕಾಯಿರಿಸಯ್ಯ, ಚೆನ್ನಬಸವಣ್ಣಾ.
--------------
ಹಡಪದ ಅಪ್ಪಣ್ಣ
ತನ್ನ ತಾನರಿದವರು ಎಂತಿಪ್ಪರೆಂದರೆ, ಕನ್ನಡಿಗೆ ಕನ್ನಡಿಯ ತೋರಿದಂತಿಪ್ಪರು. ಕಣ್ಣಿಲಿ ನೋಡಿದರೆ ಮನದಲ್ಲಿ ಹಳಚದಂತಿಪ್ಪರು. ಕುಂದಣದ ಚಿನ್ನವ ಪುಟಕೆ ಹಾಕಿದಂತಿಪ್ಪರು. ಅದಂತಿರಲಿ, ಮುಂದೆ ಮೀರಿದ ಘನವು ಅಗಮ್ಯವಾಯಿತ್ತು. ಇದನರಿಯಬಾರದು. ಇನ್ನು ತನ್ನ ತಾನರಿಯದವರು ಎತ್ತಿಪ್ಪರೆಂದರೆ, ಕೇಳಿ. ಚಿನ್ನ ಬಣ್ಣವಿಟ್ಟಂತಿಪ್ಪರು ಕಾಣಾ. ಬಸವಪ್ರಿಯ ಕೂಡಲಚೆನ್ನಬಸವಣ್ಣಾ.
--------------
ಹಡಪದ ಅಪ್ಪಣ್ಣ
ಸಟೆಯ ದಿಟವಮಾಡಿ ಕಂಡು ಸ್ವಭಾವವಾಗಿ ಸದ್ಭಾವದಿಂ ಲಿಂಗವಾಗಿ ಲಿಂಗವನು ಭಕ್ತಿಯಿಂದ ಪೂಜಿಸಿ ಲಿಂಗದಲ್ಲಿ ವರವ ಪಡೆದು, ಶಿವಪದವ ಪಡೆದರು ಪುರಾತನರು. ಅದೆಂತೆನಲು ಕೇಳಿರೆ: ಬಳ್ಳ ಲಿಂಗವೆ? ಅಲ್ಲ, ಅದು ಸಟೆ, ಸದ್ಭಾವದಿಂ ಲಿಂಗವಾಯಿತ್ತು, ಬಳ್ಳೇಶ್ವರ ಮಲ್ಲಯ್ಯಗಳಿಂದ. ಆಡಿನ ಹಿಕ್ಕೆ ಲಿಂಗವೆ? ಅಲ್ಲ, ಅದು ಸಟೆ. ಸದ್ಭಾವದಿಂ ಲಿಂಗವಾಯಿತ್ತು, ಗೊಲ್ಲಾಳರಾಯನಿಂದ. ನರಮಾಂಸವ ಭಕ್ಷಿಸುವೆನೆಂಬವ ಜಂಗಮವೆ? ಅಲ್ಲ, ಅದು ಸಟೆ. ಸದ್ಭಾವದಿಂ ಭಾವಿಸೆ ಜಂಗಮವಾಗಿ ಕೇವಲ ಲಿಂಗವಾಯಿತ್ತು ಸಿರಿಯಾಳನಿಂದ. ಸತ್ತ ಕರುವ ಹೊತ್ತು ಮಾದಾರನಾಗಿಬರುವುದು ಜಂಗಮಲಕ್ಷಣವೇ? ಅಲ್ಲ, ಅದು ಸಟೆ. ಸದ್ಭಾವದಿಂ ಭಾವಿಸೆ ಜಂಗಮ ಲಿಂಗವಾಯಿತ್ತು ಕೆಂಭಾವಿಯ ಭೋಗಣ್ಣನಿಂದ. ಡೊಂಬಿತಿ ಗುರುವೆ? ಅಲ್ಲ, ಅದೂ ಸಟೆ. ಸದ್ಭಾವದಿಂ ಭಾವಿಸೆ ಲಿಂಗವಾಯಿತ್ತು ಗುರುಭಕ್ತಯ್ಯಂಗಳಿಂದ. ಇಂತು ಸಟೆಯ ದಿಟವ ಮಾಡಿ ದಿಟವಾದರು, ಸದ್ಭಕ್ತರಾದರು, ಕೇವಲ ಲಿಂಗವ ಮಾಡಿದರು. ದಿಟ ಶಿವನ ಸಟೆಯ ಮಾಡಿ ಕಂಡು ಸನತ್ಕುಮಾರನೊಂಟೆಯಾದನು. ದಿಟ ಶಿವನ ಸಟೆಯ ಮಾಡಿ ಕಂಡು ಬ್ರಹ್ಮ ತನ್ನ ಶಿರವ ಹೋಗಾಡಿಕೊಂಡನು. ದಿಟ ಶಿವನ ಸಟೆಯ ಮಾಡಿ ಕಂಡು ದಕ್ಷನು ತನ್ನ ಶಿರವ ಹೋಗಾಡಿಕೊಂಡನು. ದಿಟ ಶಿವನ ಸಟೆಯ ಮಾಡಿ ಕಂಡು ನರಸಿಂಹನು ವಧೆಗೊಳಗಾದನು. ಈ ಮಹಾ ತಪ್ಪುಗಳನ್ನು ಮಾಡಿ ದೋಷಿಗಳಾದರು. ಮಹಾಲಿಂಗದ ಸದ್ಭಕ್ತರು, ಮಹಾಶರಣಪ್ಪ ನಂದೀಶ್ವರ ವೀರಭದ್ರ ಮೊದಲಾದ ಮಹಾಗಣಂಗಳಿಗೆ ಸದ್ಭಕ್ತಿಯ ಮಾಡಿ ತಪ್ಪ ಪರಿಹರಿಸಿಕೊಂಡು ಸದ್ಭಕ್ತರಾದರು. ಸಟೆಯ ದಿಟವ ಮಾಡುವ ಶಕ್ತಿಯಿಲ್ಲ ಎಮ್ಮ ಸದ್ಭಕ್ತರಂತೆ. ಅದಂತಿರಲಿ, ದಿಟವ ಸಟೆಯ ಮಾಡಿ ದೋಷಿಗಳಾದಿರಿ ಅಭಕ್ತರಂತೆ. ಅದಂತಿರಲಿ, ಸಟೆಯ ದಿಟವ ಮಾಡಬೇಡ, ದಿಟವ ಸಟೆಯ ಮಾಡಬೇಡ. ಸಹಜಸ್ವಭಾವ ನಿತ್ಯಸತ್ಯವಹ ತಾತ್ಪರ್ಯವನೆ ವಿಶ್ವಾಸವ ಮಾಡಿ, ನಂಬಿ ಭಕ್ತಿಯಿಂ ಪೂಜಿಸಿ ಅವಿಶ್ವಾಸದಿಂ ಕೆಡಬೇಡ, ಕೆಡಬೇಡ. ಸಹಜವಹ ದೃಷ್ಟವಹ ಪರಶಿವನು ಶ್ರೀಗುರು ವಿಶ್ವಾಸವಂ ಮಾಡಿ ನಂಬಿರಣ್ಣಾ, ಮತ್ತೆಯೂ ನಂಬಿರಣ್ಣಾ. ಆ ಪರಶಿವನು ಶ್ರೀಗುರುಲಿಂಗವು ಏಕವಾದ ಲಿಂಗವು ವಿಶ್ವಾಸವ ಮಾಡಿ ನಂಬಿರಣ್ಣಾ, ಮತ್ತೆಯೂ ನಂಬಿರಣ್ಣಾ. ಆ ಪರಶಿವಮೂರ್ತಿ ಜಂಗಮವು ವಿಶ್ವಾಸವ ಮಾಡಿ ನಂಗಿರಣ್ಣಾ, ಮತ್ತೆಯೂ ನಂಬಿರಣ್ಣಾ. ಕೇವಲವಿಶ್ವಾಸವ ಮಾಡಿ ಪ್ರಸಾದವ ಪಡೆದು ಮುಕ್ತರಾಗಿ, ಇದು ದೃಷ್ಟ. ಅವಿಶ್ವಾಸದಿ ಕೆಡದಿರಿ ಕೆಡದಿರಿ. ಸರ್ವಸದ್ಭಾವವಿಶ್ವಾಸದಿಂ ಬದುಕಿರಯ್ಯಾ, ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರಲಿಂಗವ ನಂಬಿರಣ್ಣಾ.
--------------
ಉರಿಲಿಂಗಪೆದ್ದಿ
ಕಲ್ಲುದೇವರ ನಂಬಿದವರೆಲ್ಲ ಕಲಿಯುಗದ ಕತ್ತಲೆಯೊಳಗಾಗಿ ಕತ್ತೆಗಳಾಗಿ ಹೋದರು. ಅದೇನು ಕಾರಣವೆಂದರೆ: ತಮ್ಮ ದೇವರು ಇಕ್ಕಿದ ಓಗರವನುಣ್ಣಲೊಲ್ಲದೆ, ಒಡನೆ ಮಾತಾಡದು. ಗುಡಿಯ ಕಲ್ಲು ಮೇಲೆ ಬಿದ್ದರೆ ಒಡೆದು ಹಾಳಾಗಿ ಹೋಗುತ್ತದೆ. ಇಂತಪ್ಪ ಕಲ್ಲ ಪೂಜಿಸಿ, ಸಲ್ಲದೆ ಹೋದರು. ಅದಂತಿರಲಿ, ಮಣ್ಣ ದೇವರು ಎಂದು ಪೂಜಿಸಿ, ಮಜ್ಜನಕ್ಕೆ ನೀಡಲಮ್ಮದೆ, ಲಜ್ಜೆಗೆಟ್ಟು ನಾಯಾಗಿ ಬೊಗುಳಿ ಹೋದರು. ಆದಂತಿರಲಿ, ಮರನ ದೇವರೆಂದು ಪೂಜಿಸಿ ಧೂಪ ದೀಪವ ಮುಂದಿಡಲಮ್ಮರು. ಅದೊಂದು ವ್ಯಾಪಾರಕ್ಕೊಳಗಾಗಿ, ತಾಪತ್ರಯಕ್ಕೆ ಸಿಲ್ಕಿ ಪಾಪಿಗಳಾಗಿ ಸತ್ತುಹೋದರು. ಸಲ್ಲದು ಶಿವನಲ್ಲಿ. ಎಮ್ಮ ಭಕ್ತರಿಗೆ ಈ ಪರಿಯಲ್ಲ ಕೇಳಿರಣ್ಣಾ. ಇದೆಲ್ಲ ಪಾಪಿಗಳ ಹಾಗೆ, ಎನ್ನ ದೇವ ನಡೆವ, ನುಡಿವ, ಇಕ್ಕಿದರುಂಬ, ಕೊಟ್ಟರೆ ತಕ್ಕೊಂಬ, ಪೂಜಿಸಿದರೆ ಪೂಜೆಗೊಂಬ, ಅನೇಕ ಪೂಜೆಯಲ್ಲಿ. ತನ್ನ ನಂಬಿದ ಭಕ್ತರಿಗೆ-ಬುದ್ಧಿಯ ಹೇಳುವ, ಶುದ್ಧಾತ್ಮನ ತೋರುವ. ತಾ ಮುದಿನಲ್ಲಿ ಸಜ್ಜನ ಸದ್ಭಕ್ತರಲ್ಲಿ ಇದ್ದೂ ಇಲ್ಲದಂತಿಪ್ಪ. ಪ್ರಸಿದ್ಧ ಜಂಗಮಲಿಂಗವ ಪೂಜಿಸಿ, ಸ್ವಯಲಿಂಗಿಗಳಾದರು ಎಮ್ಮ ಶರಣರು. ಅವರು ಹೋದ ಹಾದಿಯ ನೋಡಿದರೆ, ಎನಗೊಂದು ಹಾದಿ ಸಿಕ್ಕಿತ್ತು. ಆ ಹಾದಿಗೊಂಡು ಹೋಗಿ ಅವರ ಪಾದವಕಂಡು, ಕೆಟ್ಟು ಬಟ್ಟಬಯಲಾದೆ ನಯ್ಯಾ, ಬಸವಪ್ರಿಯ ಕೂಡಲಚೆನ್ನಬಸವಣ್ಣಾ.
--------------
ಹಡಪದ ಅಪ್ಪಣ್ಣ
ಸ್ಥಲವಿಟ್ಟು ನಡೆಯಬೇಕೆಂಬರು, ಸ್ಥಲವಿಟ್ಟು ನುಡಿಯಬೇಕೆಂಬರು. ಸ್ಥಲದ ನೆಲೆಯನಾರೂ ಅರಿಯರು. ಕಾಯಸ್ಥಲ, ಕರಸ್ಥಲ, ಭಾವಸ್ಥಲವನರಿದು, ಆ ಕಾಯಸ್ಥಲ ಕರಸ್ಥಲ ಭಾವಸ್ಥಲದಲ್ಲಿ ಕೂಡಿ ನಿಲಿಸುವದೆ ಸ್ಥಲ. ಇದನರಿಯದೆ, ಹಿಂದಕ್ಕೆ ನುಡಿದವರ ಮಾತು ಕಲಿತುಕೊಂಡು, ಈಗ ನುಡಿವವರ ಮಾತ ಮೆಚ್ಚುವರೆ ನಮ್ಮ ಶರಣರು ? ಅದಂತಿರಲಿ. ಇನ್ನು ನೇಮವಾವುದು ಎಂದರೆ, ಗುರುಲಿಂಗಜಂಗಮದ ಪಾದೋದಕ ಪ್ರಸಾದವನರಿದು, ಅಂಗೀಕರಿಸಿ, ತನ್ನ ತನುವನೆ ಪ್ರಸಾದವ ಮಾಡುವದೀಗ ನೆಲೆ. ಈ ಸ್ಥಲದ ನೆಲೆಯ ಬಲ್ಲವರಿಗೆ ನಮೋ ನಮೋ ಎಂಬೆ. ಇದನರಿಯದೆ ಬರಿಯ ನುಡಿಯ ನುಡಿವವರ ಕಂಡರೆ ಛೀ ಎಂಬೆನು, ಬಸವಪ್ರಿಯ ಕೂಡಲಚೆನ್ನಬಸವಣ್ಣಾ.
--------------
ಹಡಪದ ಅಪ್ಪಣ್ಣ
ಹಾಕಿದ ಮುಂಡಿಗೆಯ ಎತ್ತುವರಿಲ್ಲ. ಎತ್ತಿದ ಮುಂಡಿಗೆಯ ದೃಷ್ಟದಲ್ಲಿ , ಶ್ರುತದಲ್ಲಿ ಗೆದ್ದು , ಇಸಕೊಂಬವರಿಲ್ಲ . ಈ ಉಭಯದ ಗೊತ್ತನರಿಯದೆ ಕೆಟ್ಟರು, ನಾವು ಭಕ್ತ ಜಂಗಮರೆಂಬುವರೆಲ್ಲ . ಅದಂತಿರಲಿ. ನಾನು ನೀನು ಎಂಬುಭಯದ ಗೊತ್ತನರಿದು, ದೃಷ್ಟದಲ್ಲಿ ಶ್ರುತದಲ್ಲಿ ಗೆದ್ದು ಕೊಟ್ಟು, ನ್ಯಾಯದಲ್ಲಿ ಜಗವನೊಡಂಬಡಿಸಿ ಕೊಟ್ಟು, ಆ ಸಿಕ್ಕಿಹೋಗುವ ಮುಂಡಿಗೆಯ ಎತ್ತಿಕೊಂಡು, ಸುತ್ತಿ ನೋಡಿದರೆ ಬಟ್ಟಬಯಲಾಗಿರ್ದಿತ್ತು . ಆ ಬಟ್ಟಬಯಲ ದಿಟ್ಟಿಸಿ ನೋಡಲು, ನೆಟ್ಟಗೆ ಹೋಗುತ್ತಿದೆ . ಹೋಗಹೋಗುತ್ತ ನೋಡಿದರೆ, ನಾ ಎತ್ತ ಹೋದೆನೆಂದರಿಯೆನಯ್ಯಾ, ಬಸವಪ್ರಿಯ ಕೂಡಲಚೆನ್ನಬಸವಣ್ಣ.
--------------
ಹಡಪದ ಅಪ್ಪಣ್ಣ
ಎನಗಿಲ್ಲದ ಘನವನೇರಿಸಿ ನುಡಿದಡೆ ಅದು ನಿಮ್ಮ ಲೀಲೆ, ನಾನದನು ಬೇಕೆನ್ನೆ ಬೇಡನ್ನೆ ಅದಂತಿರಲಿ. ನಿಮ್ಮ ಶ್ರೀ ಪಾದದ ಕೃಪೆಯಿಂದ ನಿಮ್ಮ ನಿಲವನರಿದೆನು. ಕೂಡಲಚೆನ್ನಸಂಗಮದೇವಾ ಎನಗೊಮ್ಮೆ ಬಸವಣ್ಣನ ಪರಿಯನರುಹಾ ಪ್ರಭುವೆ
--------------
ಚನ್ನಬಸವಣ್ಣ
ವ್ಯಾಸಾದಿಗಳಂತೆ ಶ್ವಾನಜ್ಞಾನಿಗಳಪ್ಪರೆ ಸತ್ಯಶುದ್ಧಶರಣರು ? `ನ ದೇವಃ ಕೇಶವಾತ್ಪರಂ' ಎಂದ ವ್ಯಾಸ, ತನ್ನ ತೋಳುಗಳನೆರಡನು ಹೋಗಲಾಡನೆ ? ಹಿಡಿಯರೆ ಅಂದು ಆಕಾಶಗಣಂಗಳು ? ಮರಳಿ ಈಶ್ವರನಲ್ಲದೆ ದೈವವಿಲ್ಲೆಂದು ಶ್ರುತ್ಯರ್ಥವನರಿದು ದೇವಾರ್ಚನೆಯಂ ಮಾಡಲಾಗಿ ಆ ವ್ಯಾಸನ ಎರಡು ಕರಂಗಳು ಬಂದು, ಅಶೇಷವಹಂತಹ ಚರ್ಮ ಈಶ್ವರನ ಆಲಯದ ಮುಂದೆ ಧ್ವಜಪತಾಕೆಗಳಾಗದೆ ? ಈರೇಳು ಲೋಕವು ಅರಿಯೆ. ಅನಂತಪುರಾಣಾಗಮಗಳಲ್ಲಿ ಕೇಳಿರೆ: ಈಶ್ವರಾರ್ಚನೆಯ ಮಾಡಿ ಮರಳಿ ವಿತಥವಾಗಿ ಪರದಾರಕಿಚ್ಚೈಸಿದಡೆ ಇವಂಗಿದೆ ಪ್ರಿಯವೆಂದು ಆ ಇಂದ್ರನ ಮೈಯೆಲ್ಲಾ ಅನಂಗನಹಂತಹ ಅಂಗವಾಗದೆ ? ಈರೇಳು ಭುವನವರಿಯೆ. ಮರಳಿ ಈಶ್ವರಾರ್ಚನೆಯ ಮಾಡಲು ಆ ಅಂಗದ ಯೋನಿ[ಕೂ]ಪೆಲ್ಲಾ ನಯನಂಗಳಾಗವೆ ಇಂದ್ರಂಗೆ ? ಇದನರಿದು ಶಿವಾರ್ಚನೆಯಂ ಮಾಡಿ ಶಿವನವರಿಗೆ ಧನಸಹಿತ ತ್ರಿವಿಧವ ನಿವೇದಿಸುವುದು ಶಿವಾಚಾರ ಕೇಳಿರಣ್ಣಾ. ಅರಿದರಿದು ಬರಿದೊರೆ ಹೋಗಬೇಡ. ಋಷಿಗಳ ಶಿವಾರ್ಚನೆಯ ವಿಶೇಷವಹಂತಹ ಫಲವ ಕೇಳಿರಣ್ಣಾ: ಕೀಳುಗುಲದ ಋಷಿಗಳ ಕುಲನಾಮಂಗಳ ತೊಡೆದು ಮೇಲುಗುಲನಾಮವ ಕೇಳಿರಣ್ಣಾ. ಅದು ಹೇಗೆಂದಡೆ: ಮುಖದಿಂದುತ್ಪತ್ಯವಾದ ಬ್ರಾಹ್ಮಣನು ಆ ಋಷಿಗಳ ಶಾಖೆಯಾದನು, ಅವರ ಗೋತ್ರವಾದನು. ಶಿವಾಚಾರ ವಿಶೇಷವೊ ? ಕುಲ ವಿಶೇಷವೊ ? ಹೇಳಿರಣ್ಣಾ. `ವರ್ಣಾನಾಂ ಬ್ರಾಹ್ಮಣೋ ಗುರುಃ' ಎಂಬ ಕ್ರೂರಹೃದಯರ ಮಾತ ಕೇಳಲಾಗದು. ಹೋಹೋ ಶಿವನ ಮುಖದಿಂದ ಹುಟ್ಟಿ ಉತ್ತಮವಹಂತಹ ಬ್ರಾಹ್ಮಣಧರ್ಮದಲ್ಲಿ ಜನಿಸಿದಂತಹ ವರ್ಣಿಗಳು ಕ್ಷತ್ರಿಯನ ಭಜಿಸ ಹೇಳಿತ್ತೆ ಈ ವೇದ ? `ಶಿವ ಏಕೋ ಧ್ಯೇಯಃ ಶಿವಂಕರಃ ಸರ್ವಮನ್ಯತ್ಪರಿತ್ಯಜೇತ್' ಎಂದುದಾಗಿ_ ಶಿವನನೆ ಧ್ಯಾನಿಸಿ, ಇತರ ದೇವತೆಗಳ ಬಿಡಹೇಳಿತ್ತಲ್ಲವೆ ? ಅದಂತಿರಲಿ, ಬಡಗಿ ಮಾಚಲದೇವಿಯ ಕುಲಜೆಯ ಮಾಡಿಹೆವೆಂದು ಸತ್ತ ಕಪಿಲೆಯ ಕಡಿದು ಹಂಚಿ ತಿನ್ನ ಹೇಳಿತ್ತೆ ವೇದ ? ಆಗದು ಅವದಿರ ಸಂಗ. ಅಧಮರ ವರ್ಣಾಶ್ರಮಹೀನರ ಕರ್ಮವ ಕಳೆದೆಹೆವೆಂದು ದತ್ತಪುತ್ರರಾಗಿ ಹೊರಸಿ[ನಡಿ]ಯಲಿ ನುಸುಳ ಹೇಳಿತ್ತೇ ಆ ವೇದ ? ಭುಂಜಿಸಿ ಮುಕ್ತಿಯನಿತ್ತಿಹೆವೆಂದಡೆ ಅದಂತಿರಲಿ, ಹಲ ಕೆಲ ಕಾಲ ವಂದಿಸಿದ ಗೌತಮಂಗೆ ಬಾರದೆ ಅಂದು ಗೋವಧೆ ? ಅದಂತಿರಲಿ, ಬ್ರಾಹ್ಮಣರೆ ದೈವವೆಂದು ದಾನಾದಿಗಳ ಮಾಡಿದ ಕರ್ಣನ ಶಿರಕವಚ ಹೋಗದೆ ಜಗವರಿಯೆ ? ವಿಷ್ಣುದೈವವೆಂದರ್ಚಿಸಿದ ಬಲಿ ಬಂಧನಕ್ಕೆ ಬಾರನೆ ಮೂಜಗವರಿಯೆ ? ಶಿಬಿಯ ಮಾಂಸವ ಕೊಂಡು ಇತ್ತ ಮುಕ್ತಿಯ ಕೇಳಿರಣ್ಣಾ. ಅವಂಗೆ ಬಂದ ವಿಧಿಯ ಹೇಳಲಾಗದು. ಅದಂತಿರಲಿ, ಶಿವನ ಭಕ್ತರಿಗೆ ಪರಮಾಣುವಿನಷ್ಟು ಕಾಂಚನವನೀಯೆ ಅಣಿಮಾದ್ಯಷ್ಟಮಹದೈಶ್ವರ್ಯವನೀವರು, ಮೇಲೆ ಮುಕ್ತಿಯಹುದು. ಸಕೃತ್ ಲಿಂಗಾರ್ಚಕೇ ದತ್ವಾ ಸುವರ್ಣಂ ಚಾಣುಮಾತ್ರಕಂ ಭೂಲೋಕಾಧಿಪತಿರ್ಭೂತ್ವಾ ಶಿವ ಸಾಯುಜ್ಯಮಾಪ್ನುಯಾತ್ ಎಂದುದಾಗಿ, ಅದಲ್ಲದೆ ಮತ್ತೆ ದಾನಪರಿಗ್ರಹಂಗಳಂ ಕೊಂಡ ಕೆಲಬರ ಮುಕ್ತರ ಮಾಡಿ ಶಿವಲೋಕಕ್ಕೆ ಕೊಂಡೊಯ್ದುದುಂಟಾದಡೆ ಹೇಳಿರಣ್ಣಾ ? ನಿತ್ಯಂ ಲಿಂಗಾರ್ಚನಂ ಯಸ್ಯ ನಿತ್ಯಂ ಜಂಗಮಪೂಜನಂ ನಿತ್ಯಂ ಗುರುಪದಧ್ಯಾನಂ ನಿತ್ಯಂ ನಿತ್ಯಂ ನ ಸಂಶಯಃ ಇದು ಕಾರಣ, ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರಯ್ಯನ ಶರಣಮಹಾತ್ಮೆಯನ್ನು ಯಜುರ್ವೇದ ಸಾಕ್ಷಿಯಾಗಿ ಪೇಳುವೆ ಕಾಶಿಯ ಕಾಂಡದಲ್ಲಿ.
--------------
ಉರಿಲಿಂಗಪೆದ್ದಿ
ನೀರು ಕ್ಷೀರದಂತೆ ಕೂಡಿದ ಭೇದವ, ಆರಿಗೂ ಹೇಳಲಿಲ್ಲ, ಕೇಳಲಿಲ್ಲ. ಬೆಳುಗಾರ ಬೆರಸಿ ಬೆಚ್ಚ ಬಂಗಾರಕ್ಕೆ ಸಂದುಂಟೆ ಹೇಳಾ ? ಉರಿಯುಂಡ ಕರ್ಪುರದ ಪರಿಯಂತಿರ್ದುದನು, ಇದಿರಿಂಗೆ ಕೊಂಡಾಡಿ ಹೇಳಲುಂಟೆ ? ಅದಂತಿರಲಿ,_ ನಮ್ಮ ಗುಹೇಶ್ವರಲಿಂಗದ ಕಣ್ಣಮುಂದೆ, ನಿಮ್ಮ ಧರ್ಮದಿಂದಲೊಂದು ಆಶ್ಚರ್ಯವ ಕಂಡು ಬದುಕಿದೆನು ಕಾಣಾ ಸಂಗನಬಸವಣ್ಣಾ.
--------------
ಅಲ್ಲಮಪ್ರಭುದೇವರು
ಗುರುವಿದ್ದಂತೆ ಪರರಿಗೆ ನೀಡಬಹುದೆ ? ಮನೆಯ ಆಕಳು ಉಪವಾಸ ಇರಲಾಗಿ ಪರ್ವತಕ್ಕೆ ಸೊಪ್ಪೆಯ ಹೊರಬಹುದೆ ? ಎಂಬ ಪರವಾದಿ ನೀಕೇಳು. ಗುರುವು ಶಿಷ್ಯಂಗೆ ಲಿಂಗವಕೊಟ್ಟು ತಾನು ವ್ರತಗೇಡಿಯಾಗಿ ಹೋಗುವಲ್ಲಿ ಪರರ ಪಾದೋದಕ ಪ್ರಸಾದದಿಂದ ಪವಿತ್ರನಾದಕಾರಣ, ್'ಪರರ ಕಂಡರೆ ತನ್ನಂತೆ ಕಾಣು' ಎಂದು ಗುರುವು ಹೇಳಿದ ವಾಕ್ಯವ ಮರೆದಿರಲ್ಲ ! ಅಳಿಯ ಒಡೆಯರು, ಮಗಳು ಮುತ್ತೈದೆ, ಮನೆದೇವರಿಗೆ ಶರಣೆಂದರೆ ಸಾಲದೆ ? ಎಂಬ ಅನಾಚಾರಿಗಳ ಮಾತು ಅದಂತಿರಲಿ. ಜಂಗಮದೇವರ ಪ್ರಾಣವೆಂಬ ಭಕ್ತರು ಲಿಂಗಜಂಗಮದ ಕೈಯ ಹೂವು, ಹಣ್ಣು, ಕಾಯಿ, ಪತ್ರೆ, ಹೋಗುವ ಬರುವ ಊಳಿಗವ ಕೊಂಬಾತ ಭಕ್ತನಲ್ಲ. ಅಲ್ಲಿ ಪೂಜೆಗೊಂಬಾತ ಜಂಗಮವಲ್ಲ ಇವರು ನಾಯಕ ನರಕಕ್ಕೆ ಯೋಗ್ಯರಯ್ಯಾ. ಇವರಿಬ್ಬರ ಉರಿಲಿಂಗಪೆದ್ದಿಗಳರಸು ಒಲ್ಲನವ್ವಾ.
--------------
ಉರಿಲಿಂಗಪೆದ್ದಿಗಳ ಪುಣ್ಯಸ್ತ್ರೀ ಕಾಳವ್ವೆ
ತನ್ನ ಮನೆಯನರಿಯದೆ ತವರುಮನೆಗೆ ಹಾರುವ ಹೆಣ್ಣಿನಂತೆ, ಭಿನ್ನವಿಟ್ಟು ನೋಡಿಹೆನೆಂದು, ನಿಮ್ಮನರಿಯದೆ ಕೆಟ್ಟಿತು ಜಗವೆಲ್ಲ. ಅದಂತಿರಲಿ, ಇನ್ನ ತನ್ನ ತಾನರಿದವಂಗೆ ತನುವೇ ಲಿಂಗ, ಮನವೇ ಪುಷ್ಪ. ಈ ಅನುವರಿದು, ಘನವ ನೆಮ್ಮಿದ ಶರಣರ ಎನಗೊಮ್ಮೆ ತೋರಯ್ಯಾ, ನಿಮ್ಮ ಧರ್ಮ ನಿಮ್ಮ ಧರ್ಮ, ಬಸವಪ್ರಿಯ ಕೂಡಲಚೆನ್ನಬಸವಣ್ಣ .
--------------
ಹಡಪದ ಅಪ್ಪಣ್ಣ
ಇನ್ನಷ್ಟು ... -->