ಅಥವಾ

ಒಟ್ಟು 39 ಕಡೆಗಳಲ್ಲಿ , 9 ವಚನಕಾರರು , 23 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಶ್ವೇತ ಪೀತ ಕಪೋತ ಹರಿತ ಕೃಷ್ಣ ಮಾಣಿಕವೆಂಬ ಆರು ವರ್ಣ. ಅದಕ್ಕೆ ಬ್ರಹ್ಮ ವಿಷ್ಣು ರುದ್ರ ಈಶ್ವರ ಸದಾಶಿವ ಶ್ರೀಗುರು_ಎಂಬ ಆದು ಅಧಿದೇವತೆ, ಈ ಭೇದವನೆಲ್ಲ ತಿಳಿದು ನೋಡಿ, ಉನ್ಮನಿಯ ಜ್ಯೋತಿಯ ಬ್ರಹ್ಮರಂಧ್ರದ ಸಹಸ್ರದಳ ಪದ್ಮದ ಅಮೃತಬಿಂದುವಿನೊಳಗಣ ಪ್ರಾಣವೆ ರೂಪಾಗಿ, ಪ್ರಾಣಲಿಂಗದಲ್ಲಿ ಒಡಗೂಡಬಲ್ಲ ಗುಹೇಶ್ವರಾ ನಿಮ್ಮ ಶರಣ.
--------------
ಅಲ್ಲಮಪ್ರಭುದೇವರು
ಅಯ್ಯ, ತಾರಕಾಕೃತಿ ಮೊದಲಾಗಿ ನವಾಕೃತಿಗಳು, ಅಯ್ಯ, ನಕಾರಪ್ರಣಮ ಮೊದಲಾಗಿ ನವಪ್ರಣಮಗಳು, ಅಯ್ಯ, ಭ್ರಮರನಾದ ಮೊದಲಾಗಿ ನವನಾದಗಳು, ಆಧಾರಚಕ್ರ ಮೊದಲಾಗಿ ನವಚಕ್ರಗಳು, ಪೀತವರ್ಣ ಮೊದಲಾಗಿ ನವವರ್ಣಗಳು, ಭಕ್ತಿಸ್ಥಲ ಮೊದಲಾಗಿ ನವಸ್ಥಲಗಳು, ಸ್ಥೂಲತನು ಮೊದಲಾಗಿ ನವತನುಗಳು, ಸುಚಿತ್ತಹಸ್ತ ಮೊದಲಾಗಿ ನವಹಸ್ತಗಳು, ಅಚಾರಲಿಂಗ ಮೊದಲಾಗಿ ನವಲಿಂಗಗಳು, ಘ್ರಾಣಮುಖ ಮೊದಲಾಗಿ ನವಮುಖಗಳು, ಶ್ರದ್ಧಾಭಕ್ತಿ ಮೊದಲಾಗಿ ನವಭಕ್ತಿಗಳು, ಸುಗಂಧಪದಾರ್ಥ ಮೊದಲಾಗಿ ನವಪದಾರ್ಥಗಳು, ಸುಗಂಧಪ್ರಸಾದ ಮೊದಲಾಗಿ ನವಪ್ರಸಾದಗಳು, ಬ್ರಹ್ಮಪೂಜಾರಿ ಮೊದಲಾಗಿ ನವಪೂಜಾರಿಗಳು, ಬ್ರಹ್ಮ ಅಧಿದೇವತೆ ಮೊದಲಾಗಿ ನವ ಅಧಿದೇವತೆಗಳು, ಕರ್ಮಸಾದಾಖ್ಯ ಮೊದಲಾಗಿ ನವಸಾದಾಖ್ಯಗಳು, ಸತ್ತುವೆಂಬ ಲಕ್ಷಣ ಮೊದಲಾಗಿ ನವಲಕ್ಷಣಗಳು, ಪರವೆಂಬ ಸಂಜ್ಞೆ ಮೊದಲಾಗಿ ನವಸಂಜ್ಞೆಗಳು, ಪೂರ್ವದಿಕ್ಕು ಮೊದಲಾಗಿ ನವದಿಕ್ಕುಗಳು, ಋಗ್ವೇದ ಮೊದಲಾಗಿ ನವವೇದಗಳು, ಚಿತ್ಪøಥ್ವಿ ಮೊದಲಾಗಿ ನವ ಅಂಗಗಳು, ಜೀವಾತ್ಮ ಮೊದಲಾಗಿ ನವ ಆತ್ಮರು, ಕ್ರಿಯಾಶಕ್ತಿ ಮೊದಲಾಗಿ ನವಶಕ್ತಿಯರು, ನಿವೃತ್ತಿಕಲೆ ಮೊದಲಾಗಿ ನವಕಲೆಗಳು, ಇಂತು ಇಪ್ಪತ್ತುನಾಲ್ಕು ಸಕೀಲಂಗಳು ನವವಿಧ ತೆರದಿಂದ ಇನ್ನೂರ ಹದಿನಾರು ಸಕೀಲು ಮೊದಲಾದ ಸಮಸ್ತ ಕ್ಷೇತ್ರಂಗಳನೊಳಕೊಂಡು ಎನ್ನ ಅಣುಚಕ್ರವೆಂಬ ಪರಮಕೈಲಾಸ ಚಿದಾಕಾಶಮಂಡಲದ ವರ ಚೌಕಮಂಟಪ ನವರತ್ನ ಖಚಿತ ಶೂನ್ಯಸಿಂಹಾಸನಪೀಠದಲ್ಲಿ ಮೂರ್ತಿಗೊಂಡಿರ್ದ ಪರಾತ್ಪರ ನಿಜಜಂಗಮಲಿಂಗಸ್ವರೂಪ ಸರ್ವಚೈತನ್ಯಾಧಾರಸ್ವರೂಪವಾದ ಅಣುಲಿಂಗಜಂಗಮವೆ ಪರತತ್ವ ನಿಃಕಲಪರಬ್ರಹ್ಮಮೂರ್ತಿ ಲಿಂಗಜಂಗಮಪ್ರಸಾದವೆಂದು ತನುತ್ರಯ, ಮನತ್ರಯ, ಭಾವತ್ರಯ, ಆತ್ಮತ್ರಯ, ಪ್ರಾಣತ್ರಯ, ಗುಣತ್ರಯ, ಅವಸ್ಥಾತ್ರಯ, ತತ್ವತ್ರಯ, ಕರಣತ್ರಯ, ಗುಣತ್ರಯ, ಅವಸ್ಥಾತ್ರಯ, ತತ್ವತ್ರಯ, ಕರಣತ್ರಯ, ಹಂಸತ್ರಯಂಗಳ ಪೂರ್ಣ ಮಡಿಮಾಡಿ, ನಿರ್ನಾಮವೆಂಬ ಜಲದಿಂ ಮಜ್ಜನಕ್ಕೆರದು, ನಿಃಕರಣವೆಂಬ ಗಂಧವ ಧರಿಸಿ, ನಿಃಸಂಗವೆಂಬಕ್ಷತೆಯನಿಟ್ಟು, ನಿಃಪರಿಪೂರ್ಣವೆಂಬ ಪುಷ್ಪದಮಾಲೆಯ ಧರಿಸಿ, ನಿರುಪಾಧಿಕವೆಂಬ ಧೂಪವ ಬೀಸಿ, ನಿಃಕಳೆಯೆಂಬ ಜ್ಯೋತಿಯ ಬೆಳಗಿ, ನಿಶ್ಚಲವೆಂಬ ವಸ್ತ್ರವ ಹೊದ್ದಿಸಿ, ಪರಮನಿಜಾಭರಣವ ತೊಡಿಸಿ, ನಿಃಶೂನ್ಯವೆಂಬ ನೈವೇದ್ಯವನರ್ಪಿಸಿ, ನಿರಾವಯವೆಂಬ ತಾಂಬೂಲವನಿತ್ತು, ಇಂತೀ ಅಣುಲಿಂಗಜಂಗಮಪ್ರಸಾದಕ್ಕೆ ಅಷ್ಟವಿಧಾರ್ಚನೆಯಂ ಮಾಡಿ, ಅನಂತಕೋಟಿ ಸೂರ್ಯಚಂದ್ರಾಗ್ನಿಪ್ರಭೆಯಂತೆ ಬೆಳಗುವ, ಅಣುಲಿಂಗಜಂಗಮಪ್ರಸಾದವನ್ನು ಅನುಮಿಷದೃಷ್ಟಿಯಿಂ ನಿರೀಕ್ಷಿಸಿ, ಉನ್ಮನಾಗ್ರದಲ್ಲಿ ಸಂತೋಷಂಗೊಂಡು ಆ ಅಣುಲಿಂಗಜಂಗಮಪ್ರಸಾದಪೂಜೆಯ ಸಮಾಪ್ತವ ಮಾಡಿ, ಅನಂತಕೋಟಿ ಮಹಾಮಂತ್ರಂಗಳಿಂದ ನಮಸ್ಕರಿಸಿ, ಆ ಅಣುಲಿಂಗಜಂಗಮಪ್ರಸಾದವೆ ತಾನೆಂದರಿದು ಏಕತ್ವದಿಂ, ನಿಶ್ಚಲಚಿತ್ತದೊಳ್ ಕೂಡಿ ಉಭಯವಳಿದು ಇಹಪರಂಗಳ ಹೊದ್ದದೆ, ಕನ್ನಡಿಯ ಪ್ರತಿಬಿಂಬದಂತೆ ಸರ್ವಸಂಗಪರಿತ್ಯಾಗವಾಗಿ, ನಿಜಾಚರಣೆಯಲ್ಲಿ ಆಚರಿಸಬಲ್ಲಾತನೆ ದಶವಿಧಲಿಂಗಜಂಗಮಸಂಗ ಭಕ್ತಿಪ್ರಸಾದವುಳ್ಳ ಅನಾದಿ ಅಖಂಡ ಚಿಜ್ಜ್ಯೊತಿ ಸದ್ಭಕ್ತ ಜಂಗಮ ನೋಡ ಸಂಗನಬಸವೇಶ್ವರ.
--------------
ಗುರುಸಿದ್ಧದೇವರು
ಪರತತ್ತ್ವದ ಹೃದಯದ ಮೇಲೆ ನಿರಂಜನ ಆಜ್ಞಾಚಕ್ರ. ಅಲ್ಲಿಯ ಪದ್ಮ ವಿಶ್ವತೋದಳಪದ್ಮ. ಆ ಪದ್ಮದ ವರ್ಣ ಅನಂತಕೋಟಿ ಸೂರ್ಯಚಂದ್ರಾಗ್ನಿ ಪ್ರಕಾಶದ ವರ್ಣ. ಅಲ್ಲಿಯ ಅಕ್ಷರಂಗಳು ವಿಶ್ವತೋ ಅಕ್ಷರಂಗಳು. ಆ ಅಕ್ಷರಂಗಳು ವಿಶ್ವಾತೀತವಾಗಿಹುದು. ಅಲ್ಲಿಯ ಶಕ್ತಿ ನಿರಾಮಯಾನಂದಾತೀತವೆಂಬ ಮಹಾಶಕ್ತಿ. ನಿರಂಜನಾತೀತವೆಂಬ ಮಹಾಘನಲಿಂಗವೆ ಅಧಿದೇವತೆ. ಅಲ್ಲಿಯ ನಾದ ಮಹಾಗುಹ್ಯನಾದ. ಅಲ್ಲಿಯ ಬೀಜಾಕ್ಷರ ನಿರಂಜನಪ್ರಣವ ನೋಡಾ ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಶಿವತತ್ತ್ವದ ಹೃದಯದ ಮೇಲೆ ನಿರಾಳ ಆಜ್ಞಾಚಕ್ರ. ಅಲ್ಲಿಯ ಪದ್ಮ ಅನೇಕ ಕೋಟಿದಳಪದ್ಮ. ಆ ಪದ್ಮದ ವರ್ಣ ಅಂಥಾದಿಂಥಾದೆಂದು ಉಪಮೆ ಇಲ್ಲದ ಉಪಮಾತೀತವಾಗಿಹುದು. ಅಲ್ಲಿಯ ಅಕ್ಷರ ಅನೇಕ ಕೋಟಿ ಅಕ್ಷರ ; ಆ ಅಕ್ಷರ ಸರ್ವಾತೀತವಾಗಿಹುದು. ಅಲ್ಲಿಯ ಶಕ್ತಿ ನಿರಾಳಪ್ರಣವವೆಂಬ ಮಹಾಶಕ್ತಿ. ನಿರಾಳಾತೀತವೆಂಬ ಮಹಾಘನಲಿಂಗವೆ ಅಧಿದೇವತೆ. ಅಲ್ಲಿಯ ನಾದ ಪರಮಾನಂದವೆಂಬ ಮಹಾನಾದ. ಅಲ್ಲಿ ಬೀಜಾಕ್ಷರ ಕಲಾಪ್ರಣವ ನೋಡಾ ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಪರತತ್ತ್ವದ ಅಪ್ಪುವಿನ ಮೇಲೆ ನಿರಂಜನ ಸ್ವಾಧಿಷಾ*ನಚಕ್ರ. ಅಲ್ಲಿಯ ಪದ್ಮ ನಾನೂರಐವತ್ತು ದಳದಪದ್ಮ. ಆ ಪದ್ಮದ ವರ್ಣ ಎಪ್ಪತ್ತುಸಾವಿರದಾರುನೂರುಕೋಟಿ ಸೂರ್ಯಚಂದ್ರಾಗ್ನಿ ಪ್ರಕಾಶದ ವರ್ಣ. ಅಲ್ಲಿಯ ಅಕ್ಷರ ನಾನೂರಐವತ್ತಕ್ಷರ, ಆ ಅಕ್ಷರ ಮನಾತೀತವಾಗಿಹುದು. ಅಲ್ಲಿಯ ಶಕ್ತಿ ಆನಂದಶಕ್ತಿ , ಅಚಲಾನಂದ ಬ್ರಹ್ಮವೇ ಅಧಿದೇವತೆ. ಅಲ್ಲಿಯ ನಾದ ಪರನಾದ. ಅಲ್ಲಿಯ ಬೀಜಾಕ್ಷರ ಪರಬ್ರಹ್ಮಸ್ವರೂಪವಾಗಿಹ ಪರಮೋಂಕಾರ ನೋಡಾ, ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಪೂರ್ವಜನ್ಮವ ನಿವೃತ್ತಿಯ ಮಾಡಿ ಶ್ರೀಗುರುಕರಕಮಲದಲ್ಲಿ ಜನಿಸಿದ ಭಕ್ತನ ಪಂಚಭೌತಿಕದ ತನುವಿನಂತೆ ವರ್ಣಿಸಿ ನುಡಿಯಬಹುದೆ ? ಉತ್ತಮಾಧಮ ತೃಣ ಮೊದಲಾದುವೆಲ್ಲವು ಜ್ಯೋತಿಯ ಮುಟ್ಟಿ ಜ್ಯೋತಿಯಪ್ಪುವು ಕೇಳಿರೆ. ಜ್ಯೋತಿರ್ಮಯಲಿಂಗವ ಮುಟ್ಟಿದ ತನು ಕೇವಲ ಜ್ಯೋತಿರ್ಮಯಲಿಂಗ. ಆಧಾರ, ಸ್ವಾಧಿಷಾ*ನ, ಮಣಿಪೂರಕ ಅನಾಹತ, ವಿಶುದ್ಧಿ, ಆಜ್ಞೇಯ ಬ್ರಹ್ಮರಂಧ್ರ ದಳ ಕಳೆ ವರ್ಣ ಅಧಿದೇವತೆ ಎಂದು, ಅಲ್ಲಿ ಶುಕ್ಲ ಶೋಣಿತಾತ್ಮಕನಂತೆ ವರ್ಣಿಸಿ ನುಡಿಯಬಹುದೆ, ಶಿವಲಿಂಗತನುವ ? ಷಡಾಧಾರಚಕ್ರವನು ಎನ್ನ ಸರ್ವಾಂಗದಲ್ಲಿ ಪ್ರತಿಷೆ*ಯ ಮಾಡಿ, ಅಂತರ್ಬಾಹ್ಯದಲ್ಲಿ ಭರಿತನಾಗಿ ಸರ್ವಾಂಗವ ಲಿಂಗವ ಮಾಡಿದ, ಕೂಡಲಚೆನ್ನಸಂಗಾ ಶ್ರೀಗುರುಲಿಂಗ
--------------
ಚನ್ನಬಸವಣ್ಣ
ಎನ್ನ ಸರ್ವಾಂಗವೆಲ್ಲವೂ ಲಿಂಗವಾದ ಪರಿಕ್ರಮವೆಂತೆಂದಡೆ; ಶ್ರೀಗುರು ಬಸವಣ್ಣನುಪದೇಶಿಸಿದ ಇಷ್ಟಲಿಂಗವೆನ್ನ ಸರ್ವಾಂಗದಲ್ಲಿ ಭಿನ್ನ ನಾಮಂಗಳಿಂದ ಪ್ರಕಾಶಿಸುತ್ತಿಹುದು. ಅದೆಂತೆಂದಡೆ ; ಸ್ಥೂಲಾಂಗದಲ್ಲಿ ಇಷ್ಟಲಿಂಗವೆಂದು, ಸೂಕ್ಷ್ಮಾಂಗದಲ್ಲಿ ಪ್ರಾಣಲಿಂಗವೆಂದು ಕಾರಣಾಂಗದಲ್ಲಿ ಭಾವಲಿಂಗವೆಂದು ತ್ರಿಭೇದವಾಗಿಹುದು. ಇಂತು ಅಂಗವ ಕುರಿತು ಮೂರು ತೆರನಾಯಿತ್ತು. ಇನ್ನು ಇಂದ್ರಿಯಂಗಳ ಕುರಿತು ಆರು ತೆರನಾಗಿರ್ಪುದು. ಅದು ಹೇಗೆಂದಡೆ; ಹೃದಯದಲ್ಲಿ ಮಹಾಲಿಂಗವೆಂದು, ಶ್ರೋತ್ರದಲ್ಲಿ ಪ್ರಸಾದಲಿಂಗವೆಂದು, ತ್ವಕ್ಕಿನಲ್ಲಿ ಜಂಗಮಲಿಂಗವೆಂದು, ನೇತ್ರದಲ್ಲಿ ಶಿವಲಿಂಗವೆಂದು, ಜಿಹ್ವೆಯಲ್ಲಿ ಗುರುಲಿಂಗವೆಂದು, ಘ್ರಾಣದಲ್ಲಿ ಆಚಾರಲಿಂಗವೆಂದು, ಇಂತು ಷಡಿಂದ್ರಿಯಂಗಳಲ್ಲಿ ಷಡ್ವಿಧಲಿಂಗವಾಗಿ ತೋರಿತ್ತು. ಇಂತೀ ಮರ್ಯಾದೆಯಲ್ಲಿ ಜ್ಞಾನ-ಕರ್ಮೇಂದ್ರಿಯಂಗಳಲ್ಲಿಯೂ ಲಿಂಗವೆ ಪ್ರಕಾಶಿಸುತ್ತಿಹುದು. ಅದು ಹೇಗಂದಡೆ; ಜ್ಞಾನೇಂದ್ರಿಯಂಗಳಿಗೆಯೂ ಕರ್ಮೇಂದ್ರಿಯಂಗಳಿಗೆಯೂ ಭೇದವಿಲ್ಲ. ಅದೆಂತೆಂದಡೆ, ಶ್ರೋತ್ರಕ್ಕೂ ವಾಕ್ಕಿಗೂ ಭೇದವಿಲ್ಲ, ಶಬ್ದಕ್ಕೂ ವಚನಕ್ಕೂ ಭೇದವಿಲ್ಲ; ತ್ವಕ್ಕಿಗೂ ಪಾಣಿಗೂ ಭೇದವಿಲ್ಲ, ಸ್ಪರ್ಶಕ್ಕೂ ಆದಾನಕ್ಕೂ ಭೇದವಿಲ್ಲ; ನೇತ್ರಕ್ಕೂ ಪಾದಕ್ಕೂ ಭೇದವಿಲ್ಲ, ರೂಪಿಗೂ ಗಮನಕ್ಕೂ ಭೇದವಿಲ್ಲ, ಜಿಹ್ವೆಗೂ ಗುಹ್ಯಕ್ಕೂ ಭೇದವಿಲ್ಲ, ರಸಕ್ಕೂ ಆನಂದಕ್ಕೂ ಭೇದವಿಲ್ಲ; ಘ್ರಾಣಕ್ಕೂ ಗುದಕ್ಕೂ ಭೇದವಿಲ್ಲ, ಗಂಧಕ್ಕೂ ವಿಸರ್ಜನಕ್ಕೂ ಭೇದವಿಲ್ಲ, ಇನ್ನು ಶ್ರೋತ್ರವೆಂಬ ಜ್ಞಾನೇಂದ್ರಿಯಕ್ಕೂ ವಾಕ್ಕೆಂಬ ಕರ್ಮೇಂದ್ರಿಯಕ್ಕೂ ಶಬ್ದ ವಿಷಯ, ಮೂಲಭೂತ ಆಕಾಶ, ಈಶಾನಮೂರ್ತಿ ಅಧಿದೇವತೆ. ತ್ವಕ್ಕೆಂಬ ಜ್ಞಾನೇಂದ್ರಿಯಕ್ಕೂ ಪಾಣಿಯೆಂಬ ಕರ್ಮೇಂದ್ರಿಯಕ್ಕೂ ಸ್ಪರ್ಶನ ವಿಷಯ, ಮೂಲಭೂತ ವಾಯು, ತತ್ಪುರುಷಮೂರ್ತಿ ಅಧಿದೇವತೆ. ದೃಕ್ಕೆಂಬ ಜ್ಞಾನೇಂದ್ರಿಯಕ್ಕೂ ಪಾದವೆಂಬ ಕರ್ಮೇಂದ್ರಿಯಕ್ಕೂ ರೂಪು ವಿಷಯ, ಮೂಲಭೂತ ಅಗ್ನಿ, ಅಘೋರಮೂರ್ತಿ ಅಧಿದೇವತೆ. ಜಿಹ್ವೆಯೆಂಬ ಜ್ಞಾನೇಂದ್ರಿಯಕ್ಕೂ ಗುಹ್ಯವೆಂಬ ಕರ್ಮೇಂದ್ರಿಯಕ್ಕೂ ರಸ ವಿಷಯ, ಮೂಲಭೂತ ಅಪ್ಪು, ವಾಮದೇವಮೂರ್ತಿ ಅಧಿದೇವತೆ, ಘ್ರಾಣವೆಂಬ ಜ್ಞಾನೇಂದ್ರಿಯಕ್ಕೂ ಪಾಯುವೆಂಬ ಕರ್ಮೇಂದ್ರಿಯಕ್ಕೂ ಗಂಧ ವಿಷಯ, ಮೂಲಭೂತ ಪೃಥ್ವಿ, ಸದ್ಯೋಜಾತಮೂರ್ತಿ ಅಧಿದೇವತೆ. ಇಂತೀ ಜ್ಞಾನೇಂದ್ರಿಯಂಗಳಿಗೆಯೂ ಕರ್ಮೇಂದ್ರಿಯಂಗಳಿಗೆಯೂ ಹೃದಯವೆ ಆಶ್ರಯಸ್ಥಾನವಾದ ಕಾರಣ, ಹೃದಯ ಆಕಾಶವೆನಿಸಿತ್ತು. ಅಲ್ಲಿ ಸ್ಥೂಲ ಸೂಕ್ಷ್ಮ ಕಾರಣ ರೂಪಿಂದೆಲ್ಲಾ ಇಂದ್ರಿಯಂಗಳಿರುತ್ತಿಹವು. ಗುರೂಪದೇಶದಿಂದ ಎಲ್ಲಾ ಇಂದ್ರಿಯಂಗಳಲ್ಲಿಯೂ ಲಿಂಗವೆ ಪ್ರಕಾಶಿಸುತ್ತಿಹುದು. ಅದು ಹೇಗೆಂದಡೆ; ಘ್ರಾಣದ ಘ್ರಾಣವೆ ಆಚಾರಲಿಂಗ; ಜಿಹ್ವೆಯ ಜಿಹ್ವೆಯೆ ಗುರುಲಿಂಗ; ನೇತ್ರದ ನೇತ್ರವೆ ಶಿವಲಿಂಗ; ತ್ವಕ್ಕಿನ ತ್ವಕ್ಕೆ ಜಂಗಮಲಿಂಗ; ಶ್ರೋತ್ರದ ಶ್ರೋತ್ರವೆ ಪ್ರಸಾದಲಿಂಗ; ಹೃದಯದ ಹೃದಯವೆ ಮಹಾಲಿಂಗ. ಈ ಆರು ಲಿಂಗಕ್ಕೆ ಅಂಗಸ್ಥಲ ಆರು; ಅವಾವುವೆಂದಡೆ; ಐಕ್ಯ ಶರಣ ಪ್ರಾಣಲಿಂಗಿ ಪ್ರಸಾದಿ ಮಹೇಶ್ವರ ಭಕ್ತ ಎಂದೀ ಆರು ಅಂಗಸ್ಥಲಗಳು. ಇವಕ್ಕೆ ವಿವರ; ಆತ್ಮಾಂಗದಲ್ಲಿ ಸದ್ಭಾವ ಹಸ್ತದಿಂದ ಎಲ್ಲಾ ಇಂದ್ರಿಯಂಗಳ ಪರಿಣಾಮವನು ಸಮರಸಭಕ್ತಿಯಿಂದ ಮಹಾಲಿಂಗಕ್ಕರ್ಪಿಸುವಾತನೆ ಐಕ್ಯ. ವ್ಯೋಮಾಂಗದಲ್ಲಿ ಸುಜ್ಞಾನಹಸ್ತದಿಂದ ಸುಶಬ್ದದ್ರವ್ಯವನು ಆನಂದಭಕ್ತಿಯಿಂದ ಪ್ರಸಾದಲಿಂಗಕ್ಕರ್ಪಿಸುವಾತನೆ ಶರಣ. ಅನಿಲಾಂಗದಲ್ಲಿ ಮನೋಹಸ್ತದಿಂದ ಸುಸ್ಪರ್ಶನದ್ರವ್ಯವನು ಅನುಭಾವಭಕ್ತಿಯಿಂದ ಶಿವಲಿಂಗಕ್ಕರ್ಪಿಸುವಾತನೆ ಪ್ರಾಣಲಿಂಗಿ. ಅನಲಾಂಗದಲ್ಲಿ ನಿರಹಂಕಾರಹಸ್ತದಿಂದ ಸುರೂಪುದ್ರವ್ಯವನು ಅವಧಾನಭಕ್ತಿಯಿಂದ ಶಿವಲಿಂಗಕ್ಕರ್ಪಿಸುವಾತನೆ ಪ್ರಸಾದಿ, ಜಲಾಂಗದಲ್ಲಿ ಸುಬುದ್ಧಿ ಹಸ್ತದಿಂದ ಸುರಸದ್ರವ್ಯವನು ನೈಷಿ*ಕಾಭಕ್ತಿಯಿಂದ ಗುರುಲಿಂಗಕ್ಕರ್ಪಿಸುವಾತನೆ ಮಾಹೇಶ್ವರ. ಭೂಮ್ಯಂಗದಲ್ಲಿ ಸುಚಿತ್ತಹಸ್ತದಿಂದ ಸುಗಂಧದ್ರವ್ಯವನು ಸದ್ಭಕ್ತಿಯಿಂದ ಆಚಾರಲಿಂಗಕ್ಕರ್ಪಿಸುವಾತನೆ ಭಕ್ತ. ಇನ್ನು ಷಡಾಧಾರಂಗಳಲ್ಲಿ ಷಡಕ್ಷರರೂಪದಿಂದ ಷಡ್ಲಿಂಗ ಸ್ಥಾಪ್ಯವಾಗಿಹವು. ಅದು ಹೇಗೆಂದಡೆ, ನಕಾರವೆ ಆಚಾರಲಿಂಗ, ಮಕಾರವೆ ಗುರುಲಿಂಗ, ಶಿಕಾರವೆ ಶಿವಲಿಂಗ, ವಾಕಾರವೆ ಜಂಗಮಲಿಂಗ, ಯಾಕಾರವೆ ಪ್ರಸಾದಲಿಂಗ, ಓಂಕಾರವೆ ಮಹಾಲಿಂಗ, ಎಂದು ಆರು ತೆರನಾಗಿಹವು. ಅದೆಂತೆಂದಡೆ; ಆಧಾರದಲ್ಲಿ ನಕಾರ, ಸ್ವಾಧಿಷಾ*ನದಲ್ಲಿ ಮಕಾರ, ಮಣಿಪೂರಕದಲ್ಲಿ ಶಿಕಾರ, ಅನಾಹತದಲ್ಲಿ ವಾಕಾರ, ವಿಶುದ್ಧಿಯಲ್ಲಿ ಯಕಾರ, ಆಜ್ಞೆಯಲ್ಲಿ ಓಂಕಾರ, ಇಂತೀ ಮರ್ಯಾದೆಯಲ್ಲಿ ಷಡ್ಧಾತುವಿನಲ್ಲಿ ಷಡಕ್ಷರರೂಪಿಂದ ಷಡ್ಲಿಂಗ ಸ್ಥಾಪ್ಯವಾಗಿಹವು. ಅದು ಹೇಗೆಂದಡೆ; ತ್ವಙ್ಮಯವಾಗಿಹುದು ಓಂಕಾರ, ರುಧಿರಮಯವಾಗಿಹುದು ನಕಾರ, ಮಾಂಸಮಯವಾಗಿಹುದು ಮಕಾರ, ಮೇಧೋಮಯವಾಗಿಹುದು ಶಿಕಾರ, ಅಸ್ಥಿಮಯವಾಗಿಹುದು ವಾಕಾರ, ಮಜ್ಜಾಮಯವಾಗಿಹುದು ಯಕಾರ. ಇಂತೀ ಷಡ್ಧಾತುವೆ ಷಡಕ್ಷರಮಯವಾಗಿ, ಅವೆ ಲಿಂಗಂಗಳಾಗಿ, ಒ?ಹೊರಗೆ ತೆರಹಿಲ್ಲದೆ ಸರ್ವಾಂಗವೆಲ್ಲವೂ ಲಿಂಗಮಯವಾದ ಇರವು. ಅದು ತಾನೆ ಶಿವನಿರವು, ಅದು ತಾನೆ ಶಿವನ ಭವನ. ಅದು ತಾನೆ ಶಿವನ ವಿಶ್ರಾಮಸ್ಥಾನ. ಇಂತೀ ಷಟ್ಸ್ಥಲಬ್ರಹ್ಮವನರಿದಾತನೆ ಶರಣ, ಆತನೆ ಲಿಂಗೈಕ್ಯ. ಇಂತೀ ಷಟ್ಸ್ಥಲಬ್ರಹ್ಮವೆಂಬುದು ಅಪ್ರಮಾಣ ಅಗೋಚರ ಅನಿರ್ವಾಚ್ಯವಾದ ಕಾರಣ, ವಚಿಸುತ್ತ ವಚಿಸುತ್ತ ವಚಿಸುತ್ತ ವಚನಗೆಟ್ಟಿತ್ತು. ಉಪ್ಪು ನೀರೊಳು ಕೂಡಿದಂತೆ, ವಾರಿಕಲ್ಲು ಅಂಬುಧಿಯೊಳು ಬಿದ್ದಂತೆ, ಶಿಖಿಕರ್ಪೂರ ಯೋಗದಂತೆ ಆದೆನಯ್ಯಾ ಕೂಡಲಚೆನ್ನಸಂಗಯ್ಯನಲ್ಲಿ, ಬಸವಣ್ಣನ ಭಾವಹಸ್ತ ಮುಟ್ಟಿದ ಕಾರಣ.
--------------
ಚನ್ನಬಸವಣ್ಣ
ಅಲ್ಲಿಂದತ್ತ ಪಶ್ಚಿಮಚಕ್ರಕ್ಕೆ ಏಕದಳ ಪದ್ಮ, ಹವಣಿಸಬಾರದ ತೇಜ, ಏಕಾಕ್ಷರ, ಕುರುಹಿಡಬಾರದ ನಾದ, ಅಪ್ರದರ್ಶನ ವರ್ಣ, ನಿರ್ಭಿನ್ನ ಶಕ್ತಿ, ಸರ್ವಾತ್ಮನೆಂಬ ಜಂಗಮವೆ ಅಧಿದೇವತೆ. ಪರಿಪೂರ್ಣ ಜಂಗಮಲಿಂಗ, ಅಕ್ಷರಾಕ್ಷ[ರ]ತೀತ, ನಿಶ್ಶಬವಾಗಿಪ್ಪುದು. ಇಂತಪ್ಪ ಲಿಂಗಾಂಗವೆ ತಾನಾಗಿ, ಅವಿರಳ ಜಂಗಮಭಕ್ತಿಯ ಮಾಡಬಲ್ಲಾತನೆ, ಬಸವಪ್ರಿಯ ಕೂಡಲಚೆನ್ನಸಂಗಯ್ಯನಲ್ಲಿ ಸಂಗನಬಸವಣ್ಣನಯ್ಯಾ, ಪ್ರಭುವೆ.
--------------
ಸಂಗಮೇಶ್ವರದ ಅಪ್ಪಣ್ಣ
ಪರತತ್ತ್ವದ ಆಕಾಶದ ಮೇಲೆ ನಿರಂಜನ ವಿಶುದ್ಧಿಚಕ್ರ. ಅಲ್ಲಿಯ ಪದ್ಮ ನೂರಾ ಎಂಬತ್ತುದಳದಪದ್ಮ. ಆ ಪದ್ಮದ ವರ್ಣ ನೂರುಸಾವಿರದಾರುನೂರು ಕೋಟಿ ಸೂರ್ಯಚಂದ್ರಾಗ್ನಿ ಪ್ರಕಾಶದ ವರ್ಣ. ಅಲ್ಲಿಯ ಅಕ್ಷರ ನೂರಾ ಎಂಬತ್ತಕ್ಷರ ; ಆ ಅಕ್ಷರ ಜ್ಞಾನಾತೀತವಾಗಿಹುದು. ಅಲ್ಲಿಯ ಶಕ್ತಿ ನಿರಾಮಯವೆಂಬ ಮಹಾಶಕ್ತಿ. ಆನಂದಬ್ರಹ್ಮವೆ ಅಧಿದೇವತೆ. ಅಲ್ಲಿಯ ನಾದ ನಿರಾಳಾನಂದವೆಂಬ ಮಹಾನಾದ. ಅಲ್ಲಿಯ ಬೀಜಾಕ್ಷರ ಅವಾಚ್ಯಪ್ರಣವ ನೋಡಾ ಅಪ್ರಮಾಣಕೂಡಲಸಂಗಮದೇವಾ. || 650 ||
--------------
ಬಾಲಸಂಗಯ್ಯ ಅಪ್ರಮಾಣ ದೇವ
ಆರು ಚಕ್ರದಲ್ಲಿ ಅರಿದಿಹೆನೆಂಬ ಅಜ್ಞಾನ ಜಡರುಗಳು ನೀವು ಕೇಳಿರೊ ! ಅದೆಂತೆಂದಡೆ : ಆಧಾರಚಕ್ರ ಪೃಥ್ವಿ ಸಂಬಂಧ, ಅಲ್ಲಿಗೆ ಬ್ರಹ್ಮನಧಿದೇವತೆ, ಆಚಾರ ಲಿಂಗವ ಪಿಡಿದು ಯೋಗಿಯಾಗಿ ಸುಳಿದ ! ಸ್ವಾದಿಷಾ*ನ ಚಕ್ರ ಅಪ್ಪುವಿನ ಸಂಬಂಧ, ಅಲ್ಲಿಗೆ ವಿಷ್ಣು ಅಧಿದೇವತೆ, ಗುರುಲಿಂಗವ ಪಿಡಿದು ಜೋಗಿಯಾಗಿ ಸುಳಿದ ! ಮಣಿಪೂರಕಚಕ್ರ ಅಗ್ನಿಯ ಸಂಬಂಧ, ಅಲ್ಲಿಗೆ ರುದ್ರನಧಿದೇವತೆ, ಶಿವಲಿಂಗವ ಪಿಡಿದು ಶ್ರವಣನಾಗಿ ಸುಳಿದ ! ಅನಾಹತಚಕ್ರ ವಾಯು ಸಂಬಂಧ, ಅಲ್ಲಿಗೆ ಈಶ್ವರನಧಿದೇವತೆ, ಜಂಗಮಲಿಂಗವ ಪಿಡಿದು ಸನ್ಯಾಸಿಯಾಗಿ ಸುಳಿದ ! ವಿಶುದ್ಧಿಚಕ್ರ ಆಕಾಶ ಸಂಬಂಧ, ಅಲ್ಲಿಗೆ ಸದಾಶಿವನಧಿದೇವತೆ, ಪ್ರಸಾದಲಿಂಗವ ಪಿಡಿದು ಕಾಳಾಮುಖಿಯಾಗಿ ಸುಳಿದ ! ಆಜ್ಞಾಚಕ್ರ ಪರತತ್ತ್ವ ಸಂಬಂಧ ಅಲ್ಲಿಗೆ ಪರಶಿವನಧಿದೇವತೆ, ಮಹಾಲಿಂಗವ ಪಿಡಿದು ಪಾಶುಪತಿಯಾಗಿ ಸುಳಿದ ! ಇಂತೀ ಆರುದರುಶನಂಗಳು ಬಂದಡೆ ಅಂಗಳವ ಹೋಗಲೀಸಿರಿ ! ಆ ಲಿಂಗ ನಿಮಗೆಂತಪ್ಪವು ? ಇದು ಕಾರಣ, ಮುಂದಿರ್ದ ಗುರುಲಿಂಗಜಂಗಮದ ತ್ರಿವಿಧ ಸಂಬಂಧವನರಿಯದೆ ಷಟ್ಸ್ಥಲದಲ್ಲಿ ತೃಪ್ತರಾದೆವೆಂಬ ಭ್ರಷ್ಟರ ನೋಡಾ ಗುಹೇಶ್ವರಾ !
--------------
ಅಲ್ಲಮಪ್ರಭುದೇವರು
ಪರತತ್ತ್ವದ ತೇಜದ ಮೇಲೆ ನಿರಂಜನ ಮಣಿಪೂರಕಚಕ್ರ. ಅಲ್ಲಿಯ ಪದ್ಮ ಮೂರುನೂರರುವತ್ತುದಳದಪದ್ಮ. ಆ ಪದ್ಮದ ವರ್ಣ ಎಂಬತ್ತುಸಾವಿರದಾರುನೂರುಕೋಟಿ ಸೂರ್ಯಚಂದ್ರಾಗ್ನಿ ಪ್ರಕಾಶದ ವರ್ಣ. ಅಲ್ಲಿಯ ಅಕ್ಷರ ಮೂರುನೂರರುವತ್ತಕ್ಷರ ; ಆ ಅಕ್ಷರ ವರ್ಣಾತೀತವಾಗಿಹುದು. ಅಲ್ಲಿಯ ಶಕ್ತಿ ನಿತ್ಯಾನಂದಶಕ್ತಿ ; ವಿಮಲಬ್ರಹ್ಮವೆ ಅಧಿದೇವತೆ. ಅಲ್ಲಿಯ ನಾದ ಅಮಲಾನಂದವೆಂಬ ಮಹಾನಾದ. ಅಲ್ಲಿಯ ಬೀಜಾಕ್ಷರ ಅಖಂಡಮಹಾಜ್ಯೋತಿಪ್ರಣಮ ನೋಡಾ ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ನಿಃಕಳ ನಿರುಪಮ ತೇಜೋಮಯ ನಿರಂಜನಲಿಂಗದ ನೆನಹಿನ ಮಹಾಘನ ಮಹತ್ವವನುಳ್ಳ ಮಹಾಂತ ಅಖಂಡಪರಶಿವನೊಳಗೆ ಷಡ್‍ವಕ್ತ್ರವನುಳ್ಳ ಪರಬ್ರಹ್ಮವಿರ್ಪುದು, ಆ ಪರಬ್ರಹ್ಮದಲ್ಲಿ ಬ್ರಹ್ಮಾಂಡವಿರ್ಪುದು, ಆ ಬ್ರಹ್ಮಾಂಡದೊಳಗೆ ಸಕಲ ಸ್ಥಿರಚರಪ್ರಾಣಿಗಳಿರ್ಪುವು. ಆ ಪ್ರಾಣಿಗಳ ಸತ್ಕರ್ಮ ದುಷ್ಕರ್ಮದಿಂದಾದ ಪುಣ್ಯ ಪಾಪಂಗಳಿಂದೆ ಬಂದ ಸುಖದುಃಖಂಗಳನುಂಡು ಸೃಷ್ಟಿ ಸ್ಥಿತಿ ಲಯಕ್ಕೊಳಗಾಗಿ ಅನಂತಕಾಲ ಎಂಬತ್ತುನಾಲ್ಕುಲಕ್ಷ ಜೀವರಾಶಿಯೋನಿಯಲ್ಲಿ ಬರುತಿರ್ಪುದು. ಆ ಬರುವದರೊಳಗೆ ಸತ್ಕರ್ಮದಿಂದ ಪುಣ್ಯವೊದಗಿ ಮಾನವಜನ್ಮ ಬರಲು ಈ ಮಾನವಜನ್ಮದ ಅಜ್ಞಾನಕ್ಕೆ ಆ ಮಹಾಮಹಾಂತ ಪರಿಮಳವನೊಳಕೊಂಡು ಮಹಾಂತಮಾರುತ ಸುಳಿಯಲು ಆ ಮಾರುತನ ಸೋಂಕಿಗೆ ಆ ಅಜ್ಞಾನ ಸುಜ್ಞಾನವಾಯಿತ್ತು. ಆ ಸುಜ್ಞಾನದಿಂದೆ ಸತ್ಕರ್ಮವ ಮಾಡಲು ಸಾಧುರಸಂಗವು ದೊರಕಿತ್ತು. ಆ ಸಾಧುರಸಂಗದಿಂದ ಸುಗುಣ ಅಳವಟ್ಟಿತ್ತು. ಆ ಸುಗುಣ ಅಳವಟ್ಟಲ್ಲಿ ಸಂಸಾರ ಹೇಯವಾಯಿತ್ತು. ಆ ಸಂಸಾರ ಹೇಯವಾದಲ್ಲಿ ಮುಕ್ತನಾಗಬೇಕೆಂಬೋ ಚಿಂತೆ ತಲೆದೋರಿತ್ತು. ಆ ಚಿಂತಾಪರವಶದಿಂದೆ ದುಃಖಗೊಂಡಿರಲು ಆ ಮಹಾಂತಪರಿಮಳವನೊಳಕೊಂಡು, ಮಹಾಂತಮಾರುತನೆಂಬ ಪ್ರಭುವೇ ತಾ ಮುನ್ನ ಸೋಂಕಿದ್ದಕ್ಕೆ ತನ್ನ ಬಯಸುವ ಶಿಷ್ಯನಲ್ಲಿಗೆ ತಾನೇ ಗುರುವಾಗಿ ಬಂದು, ಮೋಕ್ಷವಾಸನಿಗೆ ಅವಸ್ಥೆಯೊಳಗಿದ್ದ ಶಿಷ್ಯನ ಸಂತೈಸಿ, ಮಹಾಂತಪರಿಮಳವನುಳ್ಳ ಮುಕ್ತಿಫಲವಾಗುವ ಘನವೆಂಬ ಪುಷ್ಪಕ್ಕೆ ಮೂಲನೆನವಾದ ಮನವೆಂಬ ಲಿಂಗದಲ್ಲಿ ನಿಃಕಲವೇ ನಾನು, ನಾನೇ ನೀನು. ಹೀಗೆಂಬುವುದ ಉಸುರದೆ ಮರೆಗೈದು, ಆ ಲಿಂಗಮಂ ಪರಿಪೂರ್ಣವಾದ ಕರಕಮಲಕ್ಕೆ ಕೊಟ್ಟು ಮನವೆಂಬ ಲಿಂಗದ ನೆನವೆಂಬ ಬಳ್ಳಿಯೇ ಜಂಗಮವೆಂದು ತೋರಿ, ಆ ಬಳ್ಳಿಯ ಬೊಡ್ಡಿಯ ತಂಪು ಪಾದೋದಕವು. ಆ ಆನಂದ ತಂಪ್ಹಿಡಿಯುವುದಕ್ಕೆ ಮಡಿಯಾದ ಮೃತ್ತಿಕೆಯು ನಿರಂಜನಪ್ರಸಾದ. ಆ ಮೃತ್ತಿಕೆಗೆ ಒಡ್ಡಾದ ತೇಜೋಮಯವೇ ವಿಭೂತಿ, ಆ ತೇಜಸ್ಸು ಲಿಂಗಪೂಜೆಯೇ ರುದ್ರಾಕ್ಷಿ, ಆ ತೇಜಸ್ಸು ಲಿಂಗಸ್ಫುಟನಾದವೇ ನಿರುಪಮಮಂತ್ರ, ಇಂತೀ ಅಷ್ಟಾವರಣ ಘಟ್ಟಿಗೊಂಡು ಪೂಜಿಸಲಾಗಿ ಆ ಶಿಷ್ಯನು ಗುರುವ ಹಾಡಿ, ಲಿಂಗವ ನೋಡಿ, ಜಂಗಮವ ಪೂಜಿಸಿ, ಪಾದೋದಕವನ್ನುಪಾರ್ಜಿಸಿ, ಪ್ರಸಾದವನುಂಡು, ವಿಭೂತಿಯ ಲೇಪಿಸಿಕೊಂಡು, ರುದ್ರಾಕ್ಷಿಯ ಧರಿಸಿಕೊಂಡು, ಮಂತ್ರವ ಚಿತ್ತದೊಳಿರಿಸಿ ಆಚರಿಸಲು, ಆ ಶಿಷ್ಯನ ಕಾಯ ಆ ಗುರುವನಪ್ಪಿ ಸದ್ಗುರುವಾಯಿತ್ತು. ಮನವು ಲಿಂಗವ ಕೂಡಿ ಘನಲಿಂಗವಾಯಿತ್ತು. ಪ್ರಾಣ ಜಂಗಮವ ಮರೆಗೊಂಡು ನಿಜಜಂಗಮವಾಯಿತ್ತು. ತೃಷೆ ಪಾದೋದಕದಲ್ಲಿ ಮುಳುಗಿ ಆನಂದಪಾದೋದಕವಾಯಿತ್ತು. ಹಸಿವು ಪ್ರಸಾದದಲ್ಲಡಗಿ ಪ್ರಸಿದ್ಧಪ್ರಸಾದವಾಯಿತ್ತು. ಚಂದನ ವಿಭೂತಿಯಲ್ಲಿ ಸತ್ತು ಚಿದ್ವಿಭೂತಿಯಾಯಿತ್ತು. ಶೃಂಗಾರ ರುದ್ರಾಕ್ಷಿಯಲ್ಲಿ ಕರಗಿ ಏಕಮುಖರುದ್ರಾಕ್ಷಿಯಾಯಿತ್ತು. ಚಿತ್ತ ಮಂತ್ರದಲ್ಲಿ ಸಮರಸವಾಗಿ ಮೂಲಮಂತ್ರವಾಯಿತ್ತು. ಇಂಥಾ ಮೂಲಮಂತ್ರವೇ ಬ್ರಹ್ಮಾಂಡ, ಪಿಂಡಾಂಡ, ಸ್ಥಿರ, ಚರ, ಸಮಸ್ತಕ್ಕೆ ಕಾರಣ ಚೈತನ್ಯಸೂತ್ರವಾಗಿ ಅಂತರಂಗ ನಿವೇದಿಸಲು, ಅಲ್ಲಿ ಅಂತರಂಗದಲ್ಲಿ ತೋರುವ ಆರುಸ್ಥಲ, ಆರುಚಕ್ರ, ಆರುಶಕ್ತಿ, ಆರುಭಕ್ತಿ, ಆರುಲಿಂಗ, ಆರಾರು ಮೂತ್ತಾರು, ಇನ್ನೂರಾಹದಿನಾರು ತೋರಿಕೆಗೆ ಆ ಮೂಲಮಂತ್ರ ತಾನೇ ಕಾರಣ ಚೈತನ್ಯಸೂತ್ರವಾಗಿ ಕಾಣಿಸಲು ಸಮ್ಯಜ್ಞಾನವೆನಿಸಿತು. ಆ ಸಮ್ಯಜ್ಞಾನಬೆಳಗಿನೊಳಗೆ ಮುದ್ರೆ ಸಂಧಾನ ವಿವರ ವಿಚಾರದಿಂದೆ ಷಟ್ತಾರೆಗಳ ಸ್ವರೂಪದ ಆರುಭೂತ, ಆರುಮುಖ, ಆರುಹಸ್ತ, ಆರುಪ್ರಸಾದ, ಆರುತೃಪ್ತಿ, ಆರು ಅಧಿದೇವತೆ ಮೊದಲಾದ ಆರಾರು ಮೂವತ್ತಾರು ಇನ್ನೂರಾಹದಿನಾರು ಅನಂತ ತೋರಿಕೆಯೆಲ್ಲಾ ಮಂತ್ರಸ್ವರೂಪವೇ ಆಗಿ ತೋರಿದಲ್ಲಿ ತತ್ವಜ್ಞಾನವಾಯಿತು. ಒಳಗೇಕವಾದ ತತ್ವಜ್ಞಾನವು ಹೊರಗೆ ನೋಡಲು ಹೊರಗೇಕವಾಗಿ ತೋರಿತು. ಒಳಹೊರಗೆಂಬಲ್ಲಿ ನಡುವೆಂಬುದೊಂದು ತೋರಿತು. ಈ ಮೂರು ಒಂದೇ ಆಗಿ, ಒಂದೇ ಬ್ಯಾರೆ ಬ್ಯಾರೆ ಸ್ಥೂಲ ಸೂಕ್ಷ್ಮ ಕಾರಣ ಮೂರಾದಲ್ಲಿ ಆತ್ಮಜ್ಞಾನವಾಯಿತು. ಆ ಆತ್ಮಜ್ಞಾನದಿಂದ ಆತ್ಮಾನಾತ್ಮ ವಿಚಾರ ಗಟ್ಟಿಗೊಂಡಲ್ಲಿ ಮಹಾಜ್ಞಾನಪ್ರಕಾಶವಾಯಿತು. ಆ ಮಹಾಜ್ಞಾನದಿಂದೆ ಅನುಭವದ ದೃಷ್ಟಿಯಿಡಲು ಬೊಂಬೆಸೂತ್ರ ಆಡಿಸುವವನಂತೆ ಬ್ಯಾರೆ ಬ್ಯಾರೆ ಕಾಣಿಸಲು ಈ ಬೊಂಬೆಯ ಸೂತ್ರ ಆಡಿಸುವವನು ಇವು ಮೂರು ಎಲ್ಲಿಹವು, ಏನೆಂದು ತೂರ್ಯವೇರಿ ಸೂರೆಗೊಂಡಲ್ಲಿ ಸ್ವಯಂಬ್ರಹ್ಮವೆನಿಸಿತ್ತು. ಆ ಸ್ವಯಂಬ್ರಹ್ಮಜ್ಞಾನವು ತನ್ನ ತಾ ವಿಚಾರಿಸಲು ತನ್ನೊಳಗೆ ಜಗ, ಜಗದೊಳಗೆ ತಾನು, ತಾನೇ ಜಗ, ಜಗವೇ ತಾನೆಂಬಲ್ಲಿ ನಿಜಜ್ಞಾನವಾಯಿತು. ಆ ನಿಜಜ್ಞಾನದಿಂದೆ ನಿಜವರಿಯಲು ಆ ನಿಜದೊಳಗೆ ತಾನೇ ಜಗ, ಜಗದೊಳಗೆ ತಾನೇ ಎಂಬೋ ಎರಡಿಲ್ಲದೆ ತಾನೆ ತಾನೆಂಬೊ ಅರುವಾಯಿತು. ಆ ಅರುವು ಮರೆಗೊಂಡು ಕುರುಹು ಉಲಿಯದೆ ನಿರ್ಬೈಲಾಗಲು ಮಹಾಂತನೆಂಬ ಹೆಸರಿಲ್ಲದೆ ಹೋಗಿ ಏನೋ ಆಯಿತ್ತು ನಿರುಪಮ ನಿರಾಳ ಮಹತ್ಪ್ರಭು ಮಹಾಂತಯೋಗಿ.
--------------
ಮಡಿವಾಳಪ್ಪ / ಕಡಕೋಳ ಮಡಿವಾಳಪ್ಪ
ಶಿವತತ್ತ್ವದ ಆಕಾಶದ ಮೇಲೆ ನಿರಾಳ ವಿಶುದ್ಧಿಚಕ್ರ. ಅಲ್ಲಿಯ ಪದ್ಮ ನೂರಯೆಂಬತ್ತು ದಳದಪದ್ಮ. ಆ ಪದ್ಮ ವರ್ಣಾತೀತವಾಗಿಹುದು. ಅಲ್ಲಿಯ ಅಕ್ಷರ ನೂರಯೆಂಬತ್ತಕ್ಷರ ; ಆ ಅಕ್ಷರ ರೂಪಾತೀತವಾಗಿಹುದು. ಅಲ್ಲಿಯ ಶಕ್ತಿ ನಿರಾಳಮನೋನ್ಮನಿಶಕ್ತಿ. ಸಕಲನಿಃಕಲಾತೀತಬ್ರಹ್ಮವೇ ಅಧಿದೇವತೆ. ಅಲ್ಲಿಯ ನಾದ ಮಹಾನಾದ. ಅಲ್ಲಿಯ ಬೀಜಾಕ್ಷರ ಅನಾದಿಪ್ರಣವ ನೋಡಾ ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಅಯ್ಯ, ನಿಃಕಲಾಕೃತಿ, ಓಂಕಾರಪ್ರಣಾಮ, ಭ್ರಮರನಾದ, ಬ್ರಹ್ಮಚಕ್ರ, ಜ್ಯೋತಿವರ್ಣ, ನಿಃಕಳಂಕಸ್ಥಲ, ಚಿದ್ರೂಪತನು, ಸ್ವತಂತ್ರಹಸ್ತ, ನಿಃಕಳಂಕಲಿಂಗ, ಬ್ರಹ್ಮರಂದ್ರಮುಖ, ಸದ್ಭಾವಭಕ್ತಿ, ಪರಮಾನಂದಪದಾರ್ಥ, ಪರಮಾನಂದಪ್ರಸಾದ, ಶ್ರೀಗುರು ಪೂಜಾರಿ, ಶ್ರೀಗುರು ಅಧಿದೇವತೆ, [?ಸಾದಾಖ್ಯ] ಅಗಮ್ಯವೆಂಬ ಲಕ್ಷಣ, ಅಪ್ರಾಮಣವೆಂಬ ಸಂಜ್ಞೆ, ಹೃತ್ಕಮಲದಿಕ್ಕು, ಧನುರ್ವೇದ, ಚಿತ್ಸೂರ್ಯನೆ ಅಂಗ, ಮಹಾ ಆತ್ಮ, ಅನಾಮಯಶಕ್ತಿ, ನಿರ್ವಂಚಕ ಕಲೆ ಇಂತು ಇಪ್ಪತ್ತುನಾಲ್ಕು ಸಕೀಲಂಗಳನೊಳಕೊಂಡು ಎನ್ನ ಬ್ರಹ್ಮರಂಧ್ರಚಕ್ರವೆಂಬ ರಜತಾದ್ರಿಪರ್ವತಕ್ಷೇತ್ರದಲ್ಲಿ ಮೂರ್ತಿಗೊಂಡಿರ್ದ ಶಿವದೀಕ್ಷಾಸ್ವರೂಪವಾದ ನಿಃಕಲಲಿಂಗವೆ ರಜತೇಶ್ವರಲಿಂಗವೆಂದು ಗುಣತ್ರಯವ ಮಡಿಮಾಡಿ, ಸ್ವತಂತ್ರವೆಂಬ ಜಲದಿಂ ಮಜ್ಜನಕ್ಕೆರದು, ಸೂರ್ಯ ನಿವೃತ್ತಿಯಾದ ಗಂಧವ ಧರಿಸಿ, ಪರತಂತ್ರ ಸ್ವತಂತ್ರವಾದಕ್ಷತೆಯನಿಟ್ಟು, ಅಲ್ಲಿಹ ಸಹಸ್ರದಳಂಗಳನೆ ಪುಷ್ಪದ ಮಾಲೆಯೆಂದು ಧರಿಸಿ, ಅಲ್ಲಿಹ ಕಮಲಸದ್ವಾಸನೆಯ ಧೂಪವ ಬೀಸಿ, ಅಲ್ಲಿಹ ಜ್ಯೋತಿವರ್ಣವೆ ಕರ್ಪೂರದ ಜ್ಯೋತಿಯೆಂದು ಬೆಳಗಿ. ಅಲ್ಲಿಹ ನಿಃಕಳಾವಸ್ಥೆಯೆಂಬ ನವೀನ ವಸ್ತ್ರವ ಹೊದ್ದಿಸಿ, ನಿರಾಭಾರವೆಂಭಾಭರಣವ ತೊಡಿಸಿ, ಪರಮಾನಂದವೆಂಬ ನೈವೇದ್ಯವನರ್ಪಿಸಿ, ಸದ್ಭಾವವೆಂಬ ತಾಂಬೂಲವನಿತ್ತು, ಅಂತು ನಿಃಕಳಲಿಂಗಕ್ಕೆ ಅಷ್ಟವಿಧಾರ್ಚನೆಯಂ ಮಾಡಿ, ದಶಕೋಟಿಸೂರ್ಯನ ಪ್ರಭೆಯಂತೆ ಬೆಳಗುವ ನಿಃಕಳಲಿಂಗವನ್ನು ಕಂಗಳು ತುಂಬಿ ನೋಡಿ, ಮನದಲ್ಲಿ ಸಂತೋಷಂಗೊಂಡು, ಆ ನಿಃಕಳಲಿಂಗದ ಪೂಜೆಯ ಸಮಾಪ್ತವ ಮಾಡಿ, ಕ್ರಿಯಾಜಪವೆಂಬ ದ್ವಾದಶಪ್ರಣವಮಂತ್ರಂಗಳಿಂದೆ ನಮಸ್ಕರಿಸಿ, ಆ ನಿಃಕಳಲಿಂಗವೆ ತಾನೆಂದರಿದು ಕೂಡಿ ಎರಡಳಿದು ಸ್ವತಂತ್ರನಾಗಿ ಆಚರಿಸಬಲ್ಲಾತನೆ ಸದ್ಭಾವಭಕ್ತಿಯನುಳ್ಳ ನಿಃಕಳಂಕ ನೋಡ ಸಂಗನಬಸವೇಶ್ವರ.
--------------
ಗುರುಸಿದ್ಧದೇವರು
ಶ್ರೋತ್ರ ತ್ವಕ್ಕು ನೇತ್ರ ಜಿಹ್ವೆ ಘ್ರಾಣವೆಂಬ ಪಂಚೇಂದ್ರಿಯಂಗಳು. ಸಾಕ್ಷಿ :``ಶ್ರೋತ್ರತ್ವಕ್‍ನೇತ್ರಜಿಹ್ವಾಶ್ಚ ಘ್ರಾಣಂ ಪಂಚೇಂದ್ರಿಯಾಸ್ತಥಾ | ಆಕಾಶ ಅಗ್ನಿವಾರ್ಯುಶ್ಚ ಅಪ್‍ಪೃಥ್ವೀ ಕ್ರಮೇಣ ಚ ||'' ಎಂದುದಾಗಿ, ಇವಕ್ಕೆ ವಿವರ : ಶ್ರೋತ್ರೇಂದ್ರಿಯಕ್ಕೆ ಆಕಾಶವೆಂಬ ಮಹಾಭೂತ, ದಶದಿಕ್ಕುಗಳೆ ಅಧಿದೈವ, ಅದಕ್ಕೆ ಶಬ್ದ ವಿಷಯ. ಅಕ್ಷರಾತ್ಮಕ ಅನಕ್ಷರಾತ್ಮಕ ಇವು ಎರಡು ಅಕ್ಷರ ಭೇದ. ತ್ವಗಿಂದ್ರಿಯಕ್ಕೆ ವಾಯುವೆಂಬ ಮಹಾಭೂತ, ಚಂದ್ರನಧಿದೇವತೆ ಅದಕ್ಕೆ ಸ್ಪರುಶನ ವಿಷಯ ; ಮೃದು ಕಠಿಣ ಶೀತ ಉಷ್ಣ ಇವು ನಾಲ್ಕು ಸ್ಪರುಶನ ಭೇದ. ನೇತ್ರೇಂದ್ರಿಯಕ್ಕೆ ಅಗ್ನಿಯೆಂಬ ಮಹಾಭೂತ, ಸೂರ್ಯನಧಿದೇವತೆ. ಅದಕ್ಕೆ ರೂಪ ವಿಷಯ ; ಶ್ವೇತಪೀತ ಹರಿತ ಮಾಂಜಿಷ್ಟ ಕೃಷ್ಣ ಕಪೋತವರ್ಣ ಇವಾರು ರೂಪಭೇದ. ಜಿಹ್ವೇಂದ್ರಿಯಕ್ಕೆ ಅಪ್ಪುವೆಂಬ ಮಹಾಭೂತ, ವರುಣನಧಿದೇವತೆ. ಅದಕ್ಕೆ ರಸ ವಿಷಯ ; ಮಧುರ ಆಮ್ಲ ತಿಕ್ತ ಕಟು ಕಷಾಯ ಲವಣ ಇವಾರು ರಸಭೇದ. ಘ್ರಾಣೇಂದ್ರಿಯಕ್ಕೆ ಪೃಥ್ವಿಯೆಂಬ ಮಹಾಭೂತ. ಅಶ್ವಿನಿ ಅಧಿದೇವತೆ, ಇದಕ್ಕೆ ಗಂಧ ವಿಷಯ ; ಸುಗಂಧ ದುರ್ಗಂಧವೆರಡು ಗಂಧ ಭೇದ. ಇಂತೀ ಪಂಚೇಂದ್ರಿಯೆಂಬ ಶುನಕ ಕಂಡಕಡೆಗೆ ಹರಿಯುತಿವೆ. ಈ ಪಂಚೇಂದ್ರಿಯವ ನಿರಸನವ ಮಾಡಿ, ಪಂಚವದನನೊಳು ಬೆರದಿಪ್ಪ ನಿರ್ವಂಚಕ ಶರಣಂಗೆ ನಮೋ ನಮೋ ಎಂಬೆನಯ್ಯಾ ಪರಮಗುರು ಪಡುವಿಡಿ ಸಿದ್ಧಮಲ್ಲಿನಾಥಪ್ರಭುವೆ.
--------------
ಹೇಮಗಲ್ಲ ಹಂಪ
ಇನ್ನಷ್ಟು ... -->