ಅಥವಾ

ಒಟ್ಟು 46 ಕಡೆಗಳಲ್ಲಿ , 22 ವಚನಕಾರರು , 45 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಇನ್ನು ಇಷ್ಟಲಿಂಗದ ಸಿಂಹಾಸನ ಗದ್ದಿಗಿ ಉದ್ದರಣೆ: ಕರಕಮಲದೊಳಗೆ ಷಟ್ಕೋಣೆಯಂ ಬರದು ಇಪ್ಪತ್ತು ಮೂರು ಪ್ರಣಮಮಂ ವಿಭೂತಿಯಲ್ಲಿ ಬರದು ಲಿಂಗವ ಮೂರ್ತವ ಮಾಡಿಸಿ, ತ್ರಿಕಾಲದಲ್ಲಿ ಅರ್ಚಿಸಿ ಪೂಜಿಸಿದವರಿಗೆ ರಾಜಭಯ, ಚೋರಭಯ, ಮೃತ್ಯುಭಯ, ಸಿಡಿಲುಭಯ, ಗ್ರಹ ಭಯ, ಕುಟಿಲ ಭಯ, ವ್ಯಾದ್ಥಿ ಭಯ, ಉರಗ ಭಯ, ವೃಶ್ಚಿಕ ಭಯ, ಮೃಗಭಯ, ನೂರೆಂಟು ವ್ಯಾಧಿ ಭಯ, ಸರ್ವವ್ಯಾದ್ಥಿ ಮೊದಲಾದ ಎಲ್ಲವನು ಪರಿಹರವಪ್ಪುದು ತಪ್ಪದು ಎಂದಾತ ನಮ್ಮ ಶಾಂತಕೂಡಲಸಂಗಮದೇವ
--------------
ಗಣದಾಸಿ ವೀರಣ್ಣ
ಶ್ರೀಗುರು ಲಿಂಗ ಜಂಗಮ ಪ್ರಸಾದ ಒಂದೇ ಪರಶಿವಮೂರ್ತಿ ಮಹಾವಸ್ತುಗಳು ಕೇಳಿರಣ್ಣಾ. ಅರಿದು ಧ್ಯಾನಿಸಿ ಪೂಜಿಸಿ ಸೇವಿಸಿ ಅರ್ಚಿಸಿ ಅರ್ಪಿಸಿ ಧರಿಸಿ, ಧರ್ಮ ಅರ್ಥ ಕಾಮ ಮೋಕ್ಷ ಸಾಲೋಕ್ಯ ಸಾಮೀಪ್ಯ ಸಾರೂಪ್ಯ ಸಾಯುಜ್ಯ ಈ ಚತುರ್ವಿಧ ಪದವಿಯನೂ ಕೂಡುವರೆ, ಗುರು ಲಿಂಗ ಜಂಗಮ ಪ್ರಸಾದವ ನಂಬುವುದು. ಇದು ಸತ್ಯ, ಶಿವನಾಣೆ, ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರ.
--------------
ಉರಿಲಿಂಗಪೆದ್ದಿ
ಅರ್ಚಿಸಿ ಪೂಜಿಸುವುದಕ್ಕೆ ಅಂಗವಾಗಿ, ಮನ ನೆನೆವುದಕ್ಕೆ ಘನತರವಾಗಿ, ಪೂಜಿಸುವುದಕ್ಕೆ ಪುಣ್ಯಮೂರ್ತಿಯಾಗಿ, ಭಾವ ನೆನೆವುದಕ್ಕೆ ಭವಗೇಡಿಯಾಗಿ, ಉಭಯದಂಗವ ತಾಳಿ ನಿಂದ ಕಾಲಾಂತಕ ಬ್ಥೀಮೇಶ್ವರಲಿಂಗವು ತಾನೆ.
--------------
ಡಕ್ಕೆಯ ಬೊಮ್ಮಣ್ಣ
ಭಕ್ತಿಯುಕ್ತಿಯ ಹೊಲಬ ಬಲ್ಲವರ, ಮೂರುಲೋಕದೊಳಗಾರನೂ ಕಾಣೆ. ಲಿಂಗದಲ್ಲಿ ಭಕ್ತಿಯ ಮಾಡಿದಡೆ ಭವ ಹರಿಯದೆಂದು ಜಂಗಮಮುಖ ಲಿಂಗವೆಂದರಿದು ಅರ್ಚಿಸಿ ಪೂಜಿಸಿ ದಾಸೋಹವ ಮಾಡಿ ಪ್ರಸನ್ನತೆಯ ಹಡೆದ ಬಸವಣ್ಣನು. ಆ ಪ್ರಸನ್ನತೆಯ ರುಚಿಯನುಪಮಿಸಬಾರದು. ಆ ಬಸವಣ್ಣನ ಪ್ರಸಾದವ ಕೊಂಡು ನಾನು ಬದುಕಿದೆನು. ಆ ಬಸವಣ್ಣನ ಭಕ್ತಿಪ್ರಸಾದವ ಕೊಂಡು ಅಲ್ಲಮಪ್ರಭು ತೃಪ್ತನಾದನು. ಅಲ್ಲಮಪ್ರಭು ಕೊಂಡ ಪ್ರಸಾದದ ತೃಪ್ತಿ ಲಕ್ಷದಮೇಲೆ ತೊಂಬತ್ತಾರುಸಾವಿರ ಜಂಗಮ ತೃಪ್ತಿಯಾಯಿತು; ಆ ಲಕ್ಷದ ಮೇಲೆ ತೊಂಬತ್ತಾರುಸಾವಿರ ಜಂಗಮ ತೃಪ್ತಿಯಾದಲ್ಲಿ ಸಚರಾಚರವೆಲ್ಲ ಕೂಡೆ ತೃಪ್ತಿಯಾಯಿತ್ತೆಂದಡೆ, ಇಲ್ಲವೆಂದು ಬಿಜ್ಜರಿ ತರ್ಕಿಸಲು, ಕಪ್ಪೆಯ ಒಡಲೊಳಗೆ ಪ್ರಭುವಿನ ಪ್ರಸಾದವ ತೋರನೆ ಬಸವಣ್ಣನು ? ಇದು ಕಾರಣ ಕೂಡಲಚೆನ್ನಸಂಗಮದೇವರಲ್ಲಿ ಬಸವಣ್ಣ ಪ್ರಭುದೇವರ ಪ್ರಸಾದದ ಘನವು ತ್ರೈಲೋಕ್ಯದೊಳಗೆ ಬೆಳವಿಗೆಯಾಯಿತ್ತು !
--------------
ಚನ್ನಬಸವಣ್ಣ
ಹೊತ್ತಾರೆಯ ಪೂಜೆ, ಹಗಲಿನ ಪೂಜೆ, ಬೈಗಿನ ಪೂಜೆ, ನಿಚ್ಚಕ್ಕೆ ಪೂಜೆಯ ಮಾಡಿ ಅಚ್ಚಿಗಗೊಂಡರೆಲ್ಲರು. ನಿಶ್ಚಿಂತ ನಿರಾಳ ನಿಜೈಕ್ಯಲಿಂಗವ ಹೊತ್ತಿಂಗೆ ತರಲಹುದೆ ? ಹೊತ್ತನೆ ಪೂಜಿಸಿ, ಹೊತ್ತನೆ ಅರ್ಚಿಸಿ, ಇತ್ತಲೆಯಾದರೆಲ್ಲರು. ನಿಶ್ಚಿಂತವನರಿದು ನಿಜವನೆಯ್ದುವರೆ ಸುಚಿತ್ತ ಸಮಾಧಾನ. ಕೂಡಲಚೆನ್ನಸಂಗನೆಂಬ ಲಿಂಗ ನಿಶ್ಚಿಂತ ನಿಜೈಕ್ಯವು.
--------------
ಚನ್ನಬಸವಣ್ಣ
ದೇವರೆಂದು ಅರ್ಚಿಸಿ ಪೂಜಿಸಿ ಭಾವಿಸಿ, ಮತ್ತೆ ತ್ರಿವಿಧವ ಮುಟ್ಟಿದರೆಂದು ಕಷ್ಟಗುಣವ ನುಡಿವ ಭಕ್ತಿಹೀನರ ಕಂಡಡೆ ಅವರನೊಚ್ಚತ ತೊಲಗಬೇಕು ಶಂಭುಜಕ್ಕೇಶ್ವರಾ.
--------------
ಸತ್ಯಕ್ಕ
ಮೊನೆಯಿಲ್ಲ[ದೆ] ಮುಂಡವ ಹಿಡಿದು ಇರಿದಲ್ಲಿ ಗಾಯಕ್ಕೆ ಕುರುಹುಂಟೆ? ದೇವಪದನಿಷೆ*ಯಿಲ್ಲದಲ್ಲಿ ಅರ್ಚಿಸಿ ಪೂಜಿಸಲಿಕ್ಕೆ ದೃಷ್ಟವುಂಟೆ? ಇದು ಕಾರಣದಲ್ಲಿ ಕ್ಷುಧೆಗೆ ಅನ್ನ, ಸಮಯಕ್ಕೆ ಕ್ಷಮೆ, ನೆರೆ ಅರಿದವರಲ್ಲಿ ಹೊರೆಯಿಲ್ಲದ ಕೂಟ, ಭಕ್ತಿ ಜ್ಞಾನ ಉಭಯಸ್ಥಲಲೇಪ ಸದ್ಯೋಜಾತಲಿಂಗಕ್ಕೆ.
--------------
ಅವಸರದ ರೇಕಣ್ಣ
ಗುರು ಲಿಂಗ ಜಂಗಮ ಪ್ರಸಾದ- ಒಂದೆ ಪರಶಿವಮೂರ್ತಿ[ಯ] ಮಹಾವಸ್ತುಗಳು ಕೇಳಿರಣ್ಣಾ. ಅರಿದು ಧ್ಯಾನಿಸಿ ಪೂಜಿಸಿ ಸೇವಿಸಿ ಅರ್ಚಿಸಿ ಅರ್ಪಿಸಿ ಧರಿ[ಸೆ] ಧರ್ಮ ಅರ್ಥ ಕಾಮ ಮೋಕ್ಷ ಸಾಲೋಕ್ಯ ಸಾಮೀಪ್ಯ ಸಾರೂಪ್ಯ ಸಾಯುಜ್ಯ- ಈ ಚತುರ್ವಿಧಫಲಪದವಿಯ ಕೊಡುವ[ವು] ಗುರು ಲಿಂಗ ಜಂಗಮ ಪ್ರಸಾದವೆಂದು ನಂಬುವುದು, ಇದು ಸತ್ಯ, ಶಿವ ಬಲ್ಲ, ಶಿವನಾಣೆ. ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರಾ.
--------------
ಉರಿಲಿಂಗಪೆದ್ದಿ
ಪರಮಪವಿತ್ರ ಹರಗಣಸಾಕ್ಷಿಯಾಗಿ, ಸೂತ್ರ ಗೋತ್ರ ಪರಿಪೂಜ್ಯತ್ವವುಳ್ಳಂಥ ಕ್ರಿಯಾಶಕ್ತಿಯ ಸರ್ವೇಂದ್ರಿಮುಖದವಯವಂಗಳನು ಕೂನಗಳ ವಿಚಾರಕತ್ವದಿಂ ಘನಲಿಂಗಮೂರ್ತಿ ಶ್ರೀಗುರುವಿನ ಕರುಣಕಟಾಕ್ಷ ಶಿವದೀಕ್ಷೆಗಳಿಂದ ಪವಿತ್ರಕಾಯವೆನಿಸಿ, ಶಿವಧರ್ಮಾಂತರಾಳವೆಂಬ ದಂಡಕಮಂಡಲಗಳೆ ಕಂಭ ಕುಂಭ ಹಂದರ ಮುತ್ತೈದೆ ಬಾಸಿಂಗದೆ ಸಾಕ್ಷಿಯಾಗಿ, ಪಂಚಕಳಸ ಆರಾಧ್ಯಗಣಸಮೂಹವೆಲ್ಲ ಸಂತೋಷಂಗೈದು, ಇಷ್ಟಲಿಂಗವೆಂಬ ರಮಣಂಗೆ ಪ್ರಾಣಲಿಂಗವೆಂಬ ರಮಣಿಗೆ ಸುಹಸ್ತಗಳ ಕೂಡಿಸಿ, ಅರ್ಚಿಸಿ, ನವಸೂತ್ರವೆಂಬ ಕಂಕಣವ ಕಟ್ಟಿ, ಸ್ಥಿರಸೇಸೆಯನೆರೆದು, ಭಾವಭರಿತವಾಗಿ, ಸಮರಸಾಚರಣೆಗಳಿಂದ ಪರತತ್ವಲಿಂಗಲೋಲುಪ್ತರಾಗಿ, ಜಂಗಮಾರಾಧನೆ ದಾಸೋಹಂಭಾವದಿಂದ ಶಿವಯೋಗಸಂಪನ್ನರಾಗಿರಿಯೆಂದು ಅಭಯಕರವಿತ್ತು ಶರಣಮಹಾರುದ್ರ ಗಂಟೆಹೊಡೆದಂಥ ಕ್ರಿಯಾಶಕ್ತಿಗಳೆಷ್ಟಾದರೂ ರತಿವಿರತಿಗಳೊಳ್ ಬಳಸಿಬ್ರಹ್ಮವಾಗಿರ್ಪುದೆ ಸತ್ಯಸದ್ಧರ್ಮಿಗಳ ಸನ್ಮಾರ್ಗವು. ಈ ಸನ್ಮಾರ್ಗವನುಳಿದು, ವಿಷಯಾತುರ ಹೆಚ್ಚಿ, ಒಬ್ಬರು ಭೋಗಿಸಿದ ಎಂಜಲಸ್ತ್ರೀಯರ ಆಲಿಂಗಿಸಿ, ತನ್ನ ರಾಣಿಯೆಂದು ನುಡಿಗಣದಿಂದ ಭಾವಿಸುವುದೊಂದು ದುರಾಚಾರ. ಜಿಹ್ವೆಯಿಂದ ಮಾತುಮಾತಿಗೆ ಹೆಂಡತಿ ಅಕ್ಕ ಅವ್ವ ತಂಗಿಯೆಂದು ಬೊಗಳುವುದೊಂದು ದುರಾಚಾರ. ಪರಪುರಷಂಗೆ ರಾಣಿಯಾದ ಸ್ತ್ರೀಯಳ ಹಾವಭಾವ ವಿಲಾಸಗಳ ನೋಡಿ, ವಿಭ್ರಮಣೆಗೊಂಡು, ಅಂತರಂಗದಲ್ಲಿ ಕಳವಳಿಸಿ, ಹಾಸ್ಯರಹಸ್ಯವ ಮಾಡಬೇಕೆಂಬುದೊಂದು ದುರಾಚಾರ. ಇಂತು ತ್ರಿವಿಧರತಿಗಳಿಂದ ವರ್ತಿಸುವುದೆ ದ್ವಿತೀಯಪಾತಕ. ಇದಕ್ಕೆ ಹರನಿರೂಪ ಸಾಕ್ಷಿ : ``ಪರಸ್ತ್ರೀಣಾಂ ಚ ಸಂಸರ್ಗಾತ್ ಮೋಕ್ಷೋ ನಾಸ್ತಿ ವರಾನನೇ | ಜಪಹಾನಿಃ ತಪೋಹಾನಿಃ ರೌರವಂ ನರಕಂ ವ್ರಜೇತ್ ||'' ``ಹರಿಣಪಾದಮಾತ್ರೇಣ ಬಂಧಿತಂ ಚ ಜಗತ್ರಯಂ | ತತ್ಸುಖಂ ಬಿಂದುಮಾತ್ರೇಣ ದುಃಖಂ ಪರ್ವತಮೇವ ಚ ||'' ಇಂತೆಂಬ ಹರಗುರುವಾಕ್ಯ ಪ್ರಮಾಣವಾಗಿ, ಸದ್ಭಕ್ತ ಮಹೇಶ್ವರರು ಪರರೆಂಜಲಸ್ತ್ರೀಯಳ ಭೋಗಿಸಿದಡೆ ಹಿಂದಣ ಭವಪಾಶ ಬೆನ್ನಬಿಡದುಯೆಂದು ದ್ವಿತೀಯ ಪಾತಕಂಗಳ ನಿರಸನಂಗೈದು, ತ್ರಿಕರಣಶುದ್ಧವಾಗಿ, ನಡೆದಂತೆ ನುಡಿದು, ನುಡಿದಂತೆ ನಡೆದು, ದೃಢಚಿತ್ತರಾಗಿ, ಜಾಗ್ರ ಜಾಗ್ರ ಇನ್ನು ತಿರುಗಿ ಭವಕ್ಕೆ ಬಂದಡೆ ನಿಮ್ಮಾಣೆ, ನಿಮ್ಮ ಪ್ರಮಥರಾಣೆಯೆಂದು ತ್ರಿವಿಧಬಿಂದುಗಳ ತಡೆದು, ಸಾಕ್ಷಿ : ``ಕಾಮಃ ಕ್ರೋಧಶ್ಚ ಲೋಭಶ್ಚ ದೇಹೇ ತಿಷ*ಂತಿ ತಸ್ಕರಾಃ | ಜ್ಞಾನರತ್ನಾಪಹಾರಾಯ ತಸ್ಮಾತ್ತ್ವಂ ಜಾಗೃತೋ ಭವ ||'' ಎಂದರಿದು, ಅರುವಿನ ಮಹಾಜ್ಞಾನರತ್ನವ ಕಳೆದು, ಮತಿಭ್ರಷ್ಟ ಕ್ರಿಮಿಕೀಟ ಜನ್ಮಕ್ಕೆ ಬೀಳದಂತೆ ನಿಜೇಷ್ಟಲಿಂಗಾಂಗಸಮರತಿಯುಳ್ಳ ನಿಷ್ಟನಾಗಿ, ಪರರ ಸಂಗವ ಭವಸಂಗವೆಂದರಿದಾನಂದದಿಂದ ಸತ್ಯಶುದ್ಧನಾಗಿ, ಗುರುಹಿರಿಯರಿಗೆ ಖೊಟ್ಟಿಯಾಗದೆ, ಕಾಲಕಾಮರಟ್ಟುಳಿಯ ಕಾಡಾರಣ್ಯಕ್ಕೆ ಮಹಾಜ್ಞಾನವೆಂಬ ಕಿಚ್ಚನಿಕ್ಕಿ, ಚಿತ್ಪ್ರಭಾಬೆಳಗಿಂಗೆ ಮಹಾಬೆಳಗಾಗಿರ್ಪುದು ಕಾಣಾ ನಿರವಯಪ್ರಭು ಮಹಾಂತ ಸಿದ್ಧಮಲ್ಲಿಕಾರ್ಜುನಲಿಂಗೇಶ್ವರ.
--------------
ಮೂರುಸಾವಿರ ಮುಕ್ತಿಮುನಿ
ಇಂತಪ್ಪ ನಿರ್ಣಯವನು ಸ್ವಾನುಭಾವಜ್ಞಾನದಿಂ ತಿಳಿದು ಶಿವಜ್ಞಾನಿಗಳಾದ ಶಿವಶರಣರಿಗೆ, ಅಚ್ಚ ನಿಚ್ಚ ಸಮಯ ಏಕಪ್ರಸಾದಿಗಳೆಂದೆನ್ನಬಹುದು. ಭಕ್ತಾದಿ ಐಕ್ಯಾಂತಮಾದ ಷಟ್‍ಸ್ಥಲಬ್ರಹ್ಮ ಎಂದೆನ್ನಬಹುದು. ಅಂಗಸ್ಥಲ 44, ಲಿಂಗಸ್ಥಲ 57 ಇಂತೀ ಪಿಂಡಾದಿ ಜ್ಞಾನಶೂನ್ಯಾಂತಮಾದ ನೂರೊಂದುಸ್ಥಲ ಮೊದಲಾದ ಸರ್ವಾಚಾರಸಂಪನ್ನನೆಂದೆನ್ನಬಹುದು. ಇಂತೀ ಭೇದವನರಿಯದೆ ತಮ್ಮ ತಾವಾರೆಂಬುದು ತಿಳಿಯದಿರ್ದಂಥ ಮತಿಭ್ರಷ್ಟ ಹೊಲೆಮಾದಿಗರಿಗೆ ಅದೆಲ್ಲಿಯದೊ ಗುರುಲಿಂಗಜಂಗಮದ ತೀಥಪ್ರಸಾದಸಂಬಂಧ ? ಅದೆಲ್ಲಿಯದೋ ಅಚ್ಚ ನಿಚ್ಚ ಸಮಯ ಏಕಪ್ರಸಾದದಸಂಬಂಧ ? ಇಂತಪ್ಪ ಗುರುಲಿಂಗಜಂಗಮದ ತೀರ್ಥಪ್ರಸಾದಕ್ಕೆ ಅಂದೇ ಹೊರಗಾಗಿ ಮತ್ತೆ ಮರಳಿ ಇಂದು ನಾವು ಗುರುಲಿಂಗಜಂಗಮದ ತೀರ್ಥಪ್ರಸಾದ ಪ್ರೇಮಿಗಳೆಂದು, ಆ ತ್ರಿಮೂರ್ತಿಗಳ ತಮ್ಮಂಗದಿಂ ಭಿನ್ನವಿಟ್ಟು, ತ್ರಿಕಾಲಂಗಳಲ್ಲಿ ಸ್ನಾನವ ಮಾಡಿ, ಜಪ, ತಪ, ಮಂತ್ರ, ಸ್ತೋತ್ರಗಳಿಂದ ಪಾಡಿ, ಪತ್ರಿ, ಪುಷ್ಪ ಮೊದಲಾದುದರಿಂ ಅಷ್ಟವಿಧಾರ್ಚನೆ ಷೋಡಶೋಪಚಾರಗಳಿಂದ ಅರ್ಚಿಸಿ, ನಿತ್ಯನೇಮದಿಂ ಶೀಲ ವ್ರತಾಚಾರಂಗಳಿಂದ ಸಕಲ ಕ್ರಿಯಗಳನಾಚರಿಸಿ ಭಿನ್ನಫಲಪದವ ಪಡದು, ಕಡೆಯಲ್ಲಿ ಎಂ¨ತ್ತುನಾಲ್ಕುಲಕ್ಷ ಯೋನಿದ್ವಾರದಲ್ಲಿ ರಾಟಣದಂತೆ ತಿರುಗುವ ಭವಭಾರಿಗಳಾದ ಜೀವಾತ್ಮರಿಗೆ ಪ್ರಸಾದಿಗಳೆಂದಡೆ ಮೆಚ್ಚರಯ್ಯಾ ನಿಮ್ಮ ಶರಣರು ಕಾಡನೊಳಗಾದ ಶಂಕರಪ್ರಿಯ ಚನ್ನಕದಂಬಲಿಂಗ ನಿರ್ಮಾಯಪ್ರಭುವೆ.
--------------
ಕಾಡಸಿದ್ಧೇಶ್ವರ
ದ್ವಾದಶಮಾಸ, ಚತುದರ್ಶಿ, ದ್ವಾದಶಿ, ಅಮವಾಸಿಯೊಳಗೆ ಮಾಘಮಾಸದ ಚತುರ್ದಶಿ, ಶಿವರಾತ್ರಿ ಅಮವಾಸ್ಯೆ ಫಲಪುಣ್ಯ ಮಹಾದೊಡ್ಡದು ಎಂದು ಸ್ಕಂದಪುರಾಣ ಬ್ರಹ್ಮೋತ್ತರಕಾಂಡ, ಶ್ರುತಿವಾಕ್ಯಗಳಿಂದ ಕೇಳಿ, ಅಂತಪ್ಪ ಮಾಘಮಾಸದ ಚತುರ್ದಶಿದಿವಸ ಒಂದೊತ್ತು ಉಪವಾಸವ ಮಾಡಿ, ಪತ್ರಿ, ಪುಷ್ಪ. ಕಡ್ಡಿ, ಬತ್ತಿಯ ತಂದು ಸಾಯಂಕಾಲಕ್ಕೆ ಸ್ನಾನವ ಮಾಡಿ, ಜಂಗಮವ ಕರತಂದು ಅರ್ಚಿಸಿ, ಲಿಂಗವ ಪತ್ರಿ, ಪುಷ್ಪ, ಅಭೀಷೇಕ, ಕಡ್ಡಿ, ಬತ್ತಿ, ಏಕಾರತಿ ಪಂಚಾರತಿಗಳಿಂದ ಪೂಜಿಸಿ, ಪಾದೋದಕವ ಸೇವಿಸಿ, ಆ ಮೇಲೆ ತಮ್ಮ ಗೃಹದಲ್ಲಿ ಮಾಡಿದ ಉತ್ತಮವಾದ ಫಲಹಾರ ಜೀನಸುಗಳು ಅಂಜೂರ, ದ್ರಾಕ್ಷಿ, ಹಲಸು, ತೆಂಗು, ಕಾರಿಕ, ಬಾಳೇಹಣ್ಣು ಮೊದಲಾದ ಫಲಹಾರ ಮತ್ತಂ, ಬೆಂಡು, ಬೆತ್ತಾಸ, ಖರ್ಜೂರ, ದೂದುಪೇಡೆ, ಬುಂದೆ, ಲಡ್ಡು ಮೊದಲಾದ ಫಲಹಾರ. ಇಂತಪ್ಪ ಫಲಹಾರ ಜೀನಸು ಎಡೆಮಾಡಿ ಪ್ರಸಾದವೆಂದು ಕೈಕೊಂಡು, ಲಿಂಗಕ್ಕೆ ತೋರಿ ತೋರಿ ತಮ್ಮ ಮನಬಂದ ಪದಾರ್ಥವ ಅಂಗಕ್ಕೆ ಗಡಣಿಸಿಕೊಂಡು, ನಾವು ಇಂದಿನ ದಿವಸ ಉದಯದಿಂ ಸಾಯಂಕಾಲದ ಪರಿಯಂತರವಾಗಿ, ಒಂದೊತ್ತು ಉಪವಾಸ ಮಾಡಿ ಶಿವಯೋಗ ಮಾಡಿದೆವೆಂದು ಮೂಢ ಮಂದಮತಿ ಅಧಮರ ಮುಂದೆ ತಮ್ಮ ಬಿಂಕವ ಪೇಳಿ, ರಾತ್ರಿಯಲ್ಲಿ ಜಾಗರಣಿ ಮಾಡಬೇಕೆಂದು ತಮ್ಮ ಅಂಗದ ಮೇಲಣ ಲಿಂಗವ ಬಿಗಿಬಿಗಿದು ಕಟ್ಟಿಕೊಂಡು ಸ್ಥಾವರಲಿಂಗದ ಗುಡಿಗೆ ಹೋಗಿ ಆ ಲಿಂಗದ ಪೂಜೆಯಿಂದ ಬೆಳಗ ಕಳೆದು ಉದಯಕ್ಕೆ ಶಿವರಾತ್ರಿ ಅಮವಾಸೆ ದೊಡ್ಡದೆಂದು ಹಳ್ಳ ಹೊಳೆಗೆ ಹೋಗಿ, ಛಳಿಯಲ್ಲಿ ತಣ್ಣೀರೊಳಗೆ ಮುಳುಗಿ, ಸ್ನಾನವ ಮಾಡಿ ಬಂದು ಜಂಗಮವ ಕರಿಸಿ, ಮೃಷ್ಟಾನ್ನವ ಹೊಟ್ಟೆತುಂಬ ಘಟ್ಟಿಸಿ, ಶಿವರಾತ್ರಿ ಶಿವಯೋಗದ ಪಾರಣೆಯಾಯಿತೆಂದು ಮಹಾ ಉಲ್ಲಾಸದಿಂ ತಮ್ಮೊಳಗೆ ತಾವೇ ಇಪ್ಪರಯ್ಯಾ. ಇಂತಪ್ಪ ಅವಿಚಾರಿಗಳಾದ ಅಜ್ಞಾನ ಜೀವಾತ್ಮರಿಗೆ ವೀರಮಾಹೇಶ್ವರರೆಂದಡೆ ಪರಶಿವಯೋಗಿಗಳಾದ ಶಿವಶರಣರು ನಗುವರಯ್ಯ ಕಾಡನೊಳಗಾದ ಶಂಕರಪ್ರಿಯ ಚನ್ನಕದಂಬಲಿಂಗ ನಿರ್ಮಾಯಪ್ರಭುವೆ.
--------------
ಕಾಡಸಿದ್ಧೇಶ್ವರ
ಅಯ್ಯ ! ಪೂರ್ವವನಳಿದು ಪುನರ್ಜಾತನಾದ ಸತ್ಯಸದ್ಧರ್ಮಸ್ವರೂಪ ತಚ್ಛಿಷ್ಯನು ಶ್ರೀಗುರುಲಿಂಗಜಂಗಮದ ವೇಧಾ_ಮಂತ್ರ_ಕ್ರಿಯಾದೀಕ್ಷೆಯ ಪಡೆದು, ಅಷ್ಟಾವರಣದ ನೆಲೆಕಲೆಗಳ ತಿಳಿದು, ಪಂಚಾಚಾರ ಮೊದಲಾಗಿ ಸರ್ವಾಚಾರ ಸಂಪತ್ತಿನ ವಿವರ ತಿಳಿದು, ನೂರೊಂದು ಸ್ಥಲದ ಆಚರಣೆ_ಇನ್ನೂರಹದಿನಾರು ಸ್ಥಲದ ಸಂಬಂಧವನರಿದು, ಷಟ್ಸ್ಥಲ ಮಾರ್ಗವಿಡಿದು, ಶ್ರೀಗುರುಲಿಂಗ ಜಂಗಮಕ್ಕೆ ತನು_ಮನ_ಧನವಂಚನೆಯಿಲ್ಲದೆ ನಿರ್ವಂಚಕನಾಗಿ, ಭಕ್ತಸ್ಥಲದಲ್ಲಿ ನಿಂದಡೆ ಸತ್ಯಶುದ್ಧ ಕಾಯಕ[ವ ಮಾಡಿ] ಮಹೇಶ್ವರಸ್ಥಲದಲ್ಲಿ ನಿಂದಡೆ ಸತ್ಯಶುದ್ಧ ಭಿಕ್ಷವ ಮಾಡಿ, (ಬೇಡಿ?) ಬಂದ ಪದಾರ್ಥವ ಸಮರ್ಪಿಸಿ, ಪರದ್ರವ್ಯದಲ್ಲಿ ರಿಣಭಾರನಾಗದೆ, ಸತ್ಯಶುದ್ಧ ನಡೆನುಡಿಯಿಂದಾಚರಿಸಿ, ಶ್ರದ್ಧಾದಿ ಸಮರಸಾಂತ್ಯಮಾದ ಸದ್ಭಕ್ತಿಯ ತಿಳಿದು ಅನಾದಿಕುಳ ಸನ್ಮತವಾದ ದಶವಿಧ ಪಾದೋದಕ, ಏಕಾದಶ ಪ್ರಸಾದದ ವಿಚಾರ ಮೊದಲಾದ ಅರ್ಪಿತಾವಧಾನವ, ಪರಿಪೂರ್ಣಮಯ ಶ್ರೀಗುರುಲಿಂಗಜಂಗಮಕರುಣಕಟಾಕ್ಷೆಯಿಂದ, ಅಚ್ಚ ಪ್ರಸಾದಿಸ್ಥಲದ ಶರಣತ್ವವ ಪಡೆದು, ಸತ್ಯಸದಾಚಾರವುಳ್ಳ ಸದ್ಗುರುಲಿಂಗಜಂಗಮದ ನಿಜನಿಷ*ತ್ವಮಂ ತಿಳಿದು, ದಂತಧಾವನಕಡ್ಡಿ ಮೊದಲು Põ್ಞಪ ಕಟಿಸೂತ್ರ ಕಡೆಯಾದ ಸಮಸ್ತ ಪದಾರ್ಥವ ಗುರು_ಲಿಂಗ_ಜಂಗಮಕ್ಕೆ ಸಮರ್ಪಿಸಿ, ಅವರೊಕ್ಕುದ ಹಾರೈಸಿ, ಕೊಂಡು ಇಂತು ಅಂತರಂಗ ಪರಿಪೂರ್ಣವಾಗಿ ನಿಂದ ಸಮಯದಲ್ಲಿ, ಸ್ವಯ_ಚರ_ಪರಲೀಲೆಯ ಧರಿಸಿ ಜಂಗಮಾಕೃತಿಯಿಂದ ಬಂದ ಗುರುಲಿಂಗಜಂಗಮದ ವೃತ್ತಸ್ಥಾನವಾದ ಮೊಳಪಾದ ಪರಿಯಂತರವು ತೊಳದು ಬಹುಗುಣಿಯಲ್ಲಿ ಮಡಗಿಕೊಂಡು, ಹೊಸಮನೆ, ಹೊಸಧನ, ಧಾನ್ಯ ಭಾಂಡಭಾಜನ, ಹೊಸ ಅರುವೆ_ಆಭರಣ, ಜನನಿಜಠರದಿಂದಾದ ಅಂಗಾಂಗ, ಕಾಯಿಪಲ್ಯ, ಉಚಿತಕ್ರಿಯೆ ಮೊದಲಾಗಿ ಅರಿದಾಚರಿಸುವದು ನೋಡ ! ಆ ಮೇಲೆ ಗುರುಲಿಂಗಜಂಗಮದ ಪ್ರಕ್ಷಾಲನೆ ಮಾಡಿದ ಪಾದವನ್ನು ಮೂರು ವೇಳೆ ಅಡಿಪಾದವ ಸ್ಪರ್ಶನವ ಮಾಡಿ, ನಾಲ್ಕನೆಯ ವೇಳ್ಯಕ್ಕೆ ದಶಾಂಗುಲಿಗಳ ಒಂದು ವೇಳೆ ಸ್ಪರ್ಶನವ ಮಾಡಿದ ಉದಕವನ್ನು ಭಾಂಡಭಾಜನದಲ್ಲಿ ತುಂಬಿ ಸ್ವಪಾಕವ ಮಾಡುವುದು. ಆ ಸಮಯದಲ್ಲಿ ಬಿಂದುಮಾತ್ರ [ವಾದರೂ] ಇಷ್ಟಲಿಂಗ ಬಾಹ್ಯವಾದ ಭವಿಜನ್ಮಾತ್ಮರಿಗೆ ಹಾಕಲಾಗದು. ಇನ್ನು ಜಂಗಮದ ಅಂಗುಷ* ಎರಡು_ಅಂಗುಲಿ ಎಂಟರಲ್ಲಿ ತನ್ನ ತರ್ಜನಿ ಬೆರಳಿಂದ ಮೊದಲಂತೆ ಪಾದೋದಕವ ಮಾಡಿ, ಬಟ್ಟಲಲ್ಲಿ ಮಡಗಿ, ಪೂರ್ವದಲ್ಲಿ ಭಾಂಡದೊಳಗೆ ತುಂಬಿದ ಗುರುಪಾದೋದಕದಿಂದ ವಿಭೂತಿ ಘಟ್ಟಿಯ ಅಭಿಷೇಕವ ಮಾಡಿ, ಈ ಬಟ್ಟಲಲ್ಲಿ ಮಡಗಿದ ಲಿಂಗಪಾದೋದಕದಲ್ಲಿ ಮಿಶ್ರವ ಮಾಡಿ, ಇಪ್ಪತ್ತೊಂದು ಪ್ರಣಮವ ಲಿಖಿಸಿ ಶ್ರೀಗುರುಲಿಂಗಜಂಗಮವು ತಾನು ಮಂತ್ರಸ್ಮರಣೆಯಿಂದ ಸ್ನಾನ_ಧೂಳನ_ಧಾರಣವ ಮಾಡಿ, ಲಿಂಗಾರ್ಚನೆ ಕ್ರಿಯೆಗಳ ಮುಗಿಸಿಕೊಂಡು, ಆ ಮೇಲೆ ತೀರ್ಥವ ಪಡಕೊಂಬುವಂಥ ಲಿಂಗಭಕ್ತನು ಆ ಜಂಗಮಲಿಂಗಮೂರ್ತಿಯ ಸಮ್ಮುಖದಲ್ಲಿ ಗರ್ದುಗೆಯ ರಚಿಸಿಕೊಂಡು, ಅಷ್ಟಾಂಗಯುಕ್ತನಾಗಿ ಶರಣಾರ್ಥಿ ಸ್ವಾಮಿ ! ಜಂಗಮಲಿಂಗಾರ್ಚನೆಗೆ ಅಪ್ಪಣೆಯ ಪಾಲಿಸಬೇಕೆಂದು ಬೆಸಗೊಂಡು, ಆ ಗರ್ದುಗೆಯ ಮೇಲೆ ಮೂರ್ತವ ಮಾಡಿಕೊಂಡು ಆ ಕ್ರಿಯಾಜಂಗಮಮೂರ್ತಿಯ ಕರಕಮಲದಲ್ಲಿ ನೆಲಸಿರುವ ಪರಾತ್ಪರ ಜ್ಞಾನಜಂಗಮ ಲಿಂಗಮೂರ್ತಿಗೆ ಅಷ್ಟವಿಧಾರ್ಚನೆ_ಷೋಡಶೋಪಚಾರಂಗಳ ಸಮರ್ಪಿಸಿ, ಆ ಮೇಲೆ, ತನ್ನ ವಾಮಕರದಂಗುಲಿ ಮಧ್ಯದಲ್ಲಿ ಷಡಕ್ಷರಂಗಳ ಲಿಖಿಸಿಕೊಂಡು ಅರ್ಚಿಸಿ, ತನ್ನ ಹೃನ್ಮಂದಿರಾಲಯದಲ್ಲಿ ನೆಲಸಿರುವ ಜ್ಯೋತಿರ್ಮಯ ಇಷ್ಟಮಹಾಲಿಂಗವ ನಿರೀಕ್ಷಿಸಿ ಆ ಪರಶಿವಜಂಗಮಲಿಂಗದೇವನ ಚರಣಾಂಗುಷ*ವ, ತನ್ನ ವಾಮಕರಸ್ಥಲದಲ್ಲಿ ಸುತ್ತು ಚಿತ್ತಾನಂದ ನಿತ್ಯಪರಿಪೂರ್ಣ ಅವಿರಳ ಪರಂಜ್ಯೋತಿ ಸ್ವರೂಪವಾದ ಪ್ರಾಣಲಿಂಗವೆಂದು ಭಾವಿಸಿ ಅಷ್ಟವಿಧಾರ್ಚನೆ ಷೋಡಶೋಪಚಾರ ಕ್ರಿಯಗಳ ಮಾಡಿ, ಆಮೇಲೆ ಇಷ್ಟಲಿಂಗಜಪಪ್ರಣಮ ಒಂದು ವೇಳೆ ಪ್ರಾಣಲಿಂಗ ಜಪಪ್ರಣಮ ಒಂದು ವೇಳೆ ಭಾವಲಿಂಗ ಜಪಪ್ರಣಮ ಒಂದು ವೇಳೆ ಪ್ರದಕ್ಷಿಣವ ಮಾಡಿ ಜಂಗಮಸ್ತೋತ್ರದಿಂದ ಶರಣು ಮಾಡಿ ಪೂಜೆಯನಿಳುಹಿ, ಪಾತ್ರೆಯಲ್ಲಿರುವ ಗುರುಪಾದೋದಕದಲ್ಲಿ ಬಿಂದುಯುಕ್ತವಾಗಿ ಮೂಲ ಪ್ರಣಮವ ಲಿಖಿಸಿ ಬಲದಂಗುಷ*ದಲ್ಲಿ ನೀಡುವಾಗ ಷಡಕ್ಷರಿಮಂತ್ರವ ಆರು ವೇಳೆ ಸ್ಮರಿಸಿ, ನೀಡುವಾಗ ಅಲ್ಲಿ ಅನಾದಿಗುರುವೆಂದು ಭಾವಿಸುವುದು. ಎಡದಂಗುಷ*ದ ಮೇಲೆ ನೀಡುವಾಗ ಪಂಚಾಕ್ಷರವ ಐದು ವೇಳೆ ಸ್ಮರಿಸಿ, ನೀಡುವಾಗ ಅಲ್ಲಿ ಅನಾದಿಲಿಂಗವೆಂದು ಭಾವಿಸುವುದು. ಎರಡಂಗುಷ*ದ ಮಧ್ಯದಲ್ಲಿ ನೀಡುವಾಗ ಒಂಬತ್ತಕ್ಷರವ ಒಂದು ವೇಳೆ ಸ್ಮರಿಸಿ, ನೀಡುವಾಗ ಅಲ್ಲಿ ತ್ರಿಕೂಟಸಂಗಮ ಅನಾದಿಜಂಗಮವೆಂದು ಭಾವಿಸುವುದು. ಈ ಪ್ರಕಾರದಲ್ಲಿ ನೀಡಿದ ಮೇಲೆ ದ್ರವವನಾರಿಸಿ, ಭಸ್ಮಧಾರಣವ ಮಾಡಿ, ಒಂದೆ ಪುಷ್ಪವ ಧರಿಸಿ, ನಿರಂಜನ ಪೂಜೆಯಿಂದ ಪ್ರದಕ್ಷಣವ ಮಾಡಿ, ನಮಸ್ಕರಿಸಿ, ಆ ತೀರ್ಥದ ಬಟ್ಟಲೆತ್ತಿ ಆ ಜಂಗಮಲಿಂಗಕ್ಕೆ ಶರಣಾರ್ಥಿಯೆಂದು ಅಭಿವಂದಿಸಿ. ಅವರು ಸಲಿಸಿದ ಮೇಲೆ ತಾನು ಗರ್ದುಗೆಯ ಬಿಟ್ಟೆದ್ದು, ಪರಾತ್ಪರ ಬ್ರಹ್ಮಸ್ವರೂಪ ಜಂಗಮ ತೀರ್ಥದ ಸ್ತೋತ್ರವ ಮಾಡಿ, ಅಷ್ಟಾಂಗ ಹೊಂದಿ ಶರಣುಹೊಕ್ಕು, ನಿಮ್ಮ ಪ್ರಸಾದೋದಕಕ್ಕೆ ನಿರೂಪವ ಪಾಲಿಸಬೇಕು ಸ್ವಾಮಿ ! ಎಂದು ಬೇಡಿಕೊಂಡು ಬಂದು ಮೊದಲ ಹಾಂಗೆ ಗರ್ದುಗೆಯ ಮೇಲೆ ಮೂರ್ತವ ಮಾಡಿಕೊಂಡು ಆ ಜಂಗಮ ಮೂರ್ತಿಗಳು ಸಲಿಸಿದೋಪಾದಿಯಲ್ಲಿ ತಾನು ಸಲಿಸುವುದು. ಆಮೇಲೆ ಷಟ್ಸ್ಥಲಭಕ್ತ ಮಹೇಶ್ವರರು ಅದೇ ರೀತಿಯಲ್ಲಿ ಸಲಿಸುವುದು. ಉಳಿದ ಷಟ್ಸ್ಥಲಮಾರ್ಗವರಿಯದ ಲಿಂಗಧಾರಕಶಿಶುವಾಗಿಲಿ, ಶಕ್ತಿಯಾಗಲಿ, ದೊಡ್ಡವರಾಗಲಿ ಆ ಗರ್ದುಗೆಯ ತೆಗೆದು ಲಿಂಗಕ್ಕೆ ಅರ್ಪಿಸಿಕೊಳ್ಳಬೇಕಲ್ಲದೆ ಬಟ್ಟಲೆತ್ತಲಾಗದು. ಅದೇನು ಕಾರಣವೆಂದಡೆ, ಅವರಿಗೆ ಇಪ್ಪತ್ತೊಂದು ದೀಕ್ಷೆ, ಷಟ್ಸ್ಥಲಮಾರ್ಗ, ಸರ್ವಾಚಾರ ಸಂಪತ್ತಿನಾಚರಣೆ ಮುಂದಿದ್ದರಿಂದ ಅವರು ಬಟ್ಟಲೆತ್ತಲಾಗದು. ಹೀಂಗೆ ಸಮಸ್ತರು ಸಲಿಸಿದ ಮೇಲೆ ಕೊಟ್ಟು_ಕೊಂಡ, ಭಕ್ತ_ಜಂಗಮವು ಇರ್ವರು ಕೂಡಿ ಮುಕ್ತಾಯವ ಮಾಡಿದಲ್ಲಿಗೆ ದಶವಿಧ ಪಾದೋದಕವಾಗುವುದು. ಆ ಮೇಲೆ ಗುರುಪಾದೋದಕದಿಂದ ಪಾಕವ ಮಾಡಿದ ಭಾಂಡಭಾಜನಂಗಳು ತಾಂಬೂಲ ಪದಾರ್ಥ ಮುಂತಾಗಿ ಇರ್ವರು ಕೂಡಿ ಮೌನಮಂತ್ರ ಧ್ಯಾನದಿಂದ ಹಸ್ತಸ್ಪರ್ಶನವ ಮಾಡಿ. ಶುದ್ಧ ಪ್ರಸಾದವೆಂದು ಭಾವಿಸಿ, ಬಹುಸುಯಿದಾನದಿಂದ ಸಮಸ್ತ ಜಂಗಮಭಕ್ತ ಮಹೇಶ್ವರ ಶರಣಗಣಾರಾಧ್ಯರಿಗೆ ಎಡೆಮಾಡಿ, ಅಷ್ಟಾಂಗ ಹೊಂದಿ, ಎಡಬಲ ಗಣತಿಂಥಿಣಿಯ ನೋಡಿ, ನಿರೀಕ್ಷಿಸಿ, ಶರಣಾರ್ಥಿ ! ಸ್ವಾಮಿ ! ಮಹಾಲಿಂಗಾರ್ಪಿತವ ಮಾಡಬೇಕೆಂದು ಅಭಿವಂದಿಸಿ, ಪತಿವ್ರತತ್ವದಿಂದ ಜಂಗಮಕ್ಕೆ ನಿರ್ವಂಚಕನಾಗಿ, ಭಕ್ತ_ಜಂಗಮವೆಂಬ ಉಭಯನಾಮವಳಿದು ಕ್ಷೀರ ಕ್ಷೀರ ಬೆರೆತಂತೆ ನಿರಾಕಾರ_ ನಿಶ್ಯಬ್ಧಲೀಲೆ ಪರಿಯಂತರವು ಶ್ರೀಗುರುಲಿಂಗಜಂಗಮಪಾದೋದಕಪ್ರಸಾದವ ಸಪ್ತವಿಧಭಕ್ತಿಯಿಂದ ಸಾವಧಾನಿಯಾಗಿ ಆಚರಿಸುವಾತನೆ ಜಂಗಮಭಕ್ತನಾದ ಅಚ್ಚಪ್ರಸಾದಿಯೆಂಬೆ ಕಾಣಾ ! ಗುಹೇಶ್ವರಲಿಂಗದಲ್ಲಿ ಚೆನ್ನಬಸವಣ್ಣ.
--------------
ಅಲ್ಲಮಪ್ರಭುದೇವರು
ಸಹೀದರು ಕೊಟ್ಟ ಖುರಾನವ ಮುಂದಿಟ್ಟು ಅರ್ಚಿಸಿ ನಮಾಜ ಮಾಡುವರು. ಮಾಟವಳಿದು ಕೂಟ ನಿಂದು ಶಬ್ದವಡಗಿ ಬಯಲ ಖುದಾನಾಗಿರಬಲ್ಲಡೆ ಸಹೀದರೆಂಬೆ ಕಾಡನೊಳಗಾದ ಶಂಕರಪ್ರಿಯ ಚನ್ನಕದಂಬಲಿಂಗ ನಿರ್ಮಾಯಪ್ರಭುವೆ.
--------------
ಕಾಡಸಿದ್ಧೇಶ್ವರ
ಹೀಂಗೆ ಅರಿದು ಅರ್ಚಿಸಿ ವಂದಿಸಿ ಆರಾಧನೆಯಂ ಮಾಡಿ ತನುಕ್ರಿಯಾಮಾರ್ಗದಿಂದ ಶುದ್ಧ ಪವಿತ್ರಚರಿತನಾಗಿ, ಮಹಾಜ್ಞಾನವರ್ತಕನಾಗಿ, ಶ್ರೀಗುರುವಾಜ್ಞೆಯಂ ಮೀರದೆ ನಡೆವುದೀಗ ಗುರುಪೂಜೆಯ ಇರವು ನೋಡಾ ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ನಿನ್ನ ಹಂಗೇನು ಹರಿಯೇನು, ಅಂಜದೆ ನುಡಿವೆನು. ನೀ ಹೊರೆವ ಜಗದ ಜೀವರಾಸಿಗಳೊಳಗೆ, ಆಸೆಗೆ ಬೇರೆ ಕೊಟ್ಟುದುಳ್ಳಡೆ ಹೇಳು ದೇವಾ. ಅರ್ಚಿಸಿ ಪೂಜಿಸಿ, ನಿಮ್ಮ ವರವ ಬೇಡಿದೆನಾದಡೆ ಬಾರದ ಭವಂಗಳಲ್ಲಿ ಎನ್ನ ಬರಿಸು, ಸಕಳೇಶ್ವರದೇವಾ.
--------------
ಸಕಳೇಶ ಮಾದರಸ
ಇನ್ನಷ್ಟು ... -->