ಅಥವಾ

ಒಟ್ಟು 169 ಕಡೆಗಳಲ್ಲಿ , 45 ವಚನಕಾರರು , 128 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಜಾತಿವಿಡಿದು ಜಂಗಮವ ಮಾಡಬೇಕೆಂಬ ಪಾತಕರು ನೀವು ಕೇಳಿರೊ: ಜಾತಿ ಘನವೊ ಗುರುದೀಕ್ಷೆ ಘನವೊ ? ಜಾತಿ ಘನವಾದ ಬಳಿಕ, ಆ ಜಾತಿಯೆ ಗುರುವಾಗಿರಬೇಕಲ್ಲದೆ ಗುರುದೀಕ್ಷೆ ಪಡೆದು, ಗುರುಕರಜಾತರಾಗಿ ಜಾತಕವ ಕಳೆದು ಪುನರ್ಜಾತರಾದೆವೆಂಬುದ ಏತಕ್ಕೆ ಬೊಗಳುವಿರೊ ? ಜಾತಿವಿಡಿದು ಕಳೆಯಿತ್ತೆ ಜಾತಿತಮವು ? ಅಜಾತಂಗೆ ಆವುದು ಕುಲಳ ಆವ ಕುಲವಾದಡೇನು ದೇವನೊಲಿದಾತನೆ ಕುಲಜ. ಅದೆಂತೆಂದಡೆ; ದೀಯತೇ ಜಾÕನಸಂಬಂಧಃ ಕ್ಷೀಯತೇ ಚ ಮಲತ್ರಯಂ ದೀಯತೇ ಕ್ಷೀಯತೇ ಯೇನ ಸಾ ದೀಕ್ಷೇತಿ ನಿಗದ್ಯತೇ ಎಂಬುದನರಿದು, ಜಾತಿ ನಾಲ್ಕುವಿಡಿದು ಬಂದ ಜಂಗಮವೇ ಶ್ರೇಷ್ಠವೆಂದು ಅವನೊಡಗೂಡಿಕೊಂಡು ನಡೆದು ಜಾತಿ ಎಂಜಲುಗಳ್ಳರಾಗಿ ಉಳಿದ ಜಂಗಮವ ಕುಲವನೆತ್ತಿ ನುಡಿದು, ಅವನ ಅತಿಗಳೆದು ಕುಲವೆಂಬ ಸರ್ಪಕಚ್ಚಿ, ಎಂಜಲೆಂಬ ಅಮೇಧ್ಯವ ಭುಂಜಿಸಿ ಹಂದಿ-ನಾಯಂತೆ ಒಡಲ ಹೊರೆವ ದರುಶನಜಂಗುಳಿಗಳು ಜಂಗಮಪಥಕ್ಕೆ ಸಲ್ಲರಾಗಿ. ಅವರಿಗೆ ಗುರುವಿಲ್ಲ ಗುರುಪ್ರಸಾದವಿಲ್ಲ, ಲಿಂಗವಿಲ್ಲ ಲಿಂಗಪ್ರಸಾದವಿಲ್ಲ, ಜಂಗಮವಿಲ್ಲ ಜಂಗಮಪ್ರಸಾದವಿಲ್ಲ. ಇಂತೀ ತ್ರಿವಿಧಪ್ರಸಾದಕ್ಕೆ ಹೊರಗಾದ ನರಜೀವಿಗ? ಸ್ವಯ-ಚರ-ಪರವೆಂದಾರಾಧಿಸಿ ಪ್ರಸಾದವ ಕೊಳಸಲ್ಲದು ಕಾಣಾ ಕೂಡಲಚೆನ್ನಸಂಗಮದೇವಾ
--------------
ಚನ್ನಬಸವಣ್ಣ
ದಾನಿಯಾದಡೇನು? ಅವನ ಬೇಡಿದಲ್ಲದೆ ಅರಿಯಬಾರದು. ರಣರಂಗ ದ್ಥೀರನಾದಡೇನು ? ಅಲಗು ಅಲಗು ಹಳಚಿದಲ್ಲದೆ ಅರಿಯಬಾರದು. ಗೆಳೆಯನಾದಡೇನು ? ಅಗಲಿದಲ್ಲದೆ ಅರಿಯಬಾರದು. ಹೇಮವಾದಡೇನು ? ಒರೆಗಲ್ಲುಯಿಲ್ಲದೆ ಅರಿಯಬಾರದು. ನಿನ್ನನರಿದೆಹೆನೆಂದಡೆ : ಸಂಸಾರ ಸಾಗರವ ದಾಟಿದಲ್ಲದೆ ಅರಿಯಬಾರದು ಕಾಣಾ ಗೊಹೇಶ್ವರಪ್ರಿಯ ನಿರಾಳಲಿಂಗ.
--------------
ಗುಹೇಶ್ವರಯ್ಯ
ಮಲದೇಹಿಗಳ ಅಂಗದ ಮೇಲೆ ಲಿಂಗವಿದ್ದರೇನು ಅದು ಲಿಂಗವಲ್ಲ. ಅದೇನು ಕಾರಣವೆಂದರೆ, ಅವನು ಪ್ರಸಾದದೇಹಿ ಸಂಸ್ಕಾರಿದೇಹಿಯಲ್ಲ. ಅವನ ಸೋಂಕಿದ ಲಿಂಗವು ಕೆರೆಯ ಕಟ್ಟೆಯ ಶಿಲೆಯಂತಾಯಿತು. ಅವನು ಲಿಂಗಾಂಗಿ ಲಿಂಗಪ್ರಾಣಿಯಾಗದೆ ಅವನು ಮುಟ್ಟಿದ ಭಾಂಡ ಭಾಜನಂಗಳೆಲ್ಲ ಹೊರಮನೆ ಊರ ಅಗ್ಗವಣಿ ಎಂದೆನಿಸುವವು. ಅವನು ಮಲದೇಹಿ. ಅವನಂಗದಲ್ಲಿ ಗುರುವಿಲ್ಲ ಜಂಗಮವಿಲ್ಲ, ಪಾದೋದಕವಿಲ್ಲ ಪ್ರಸಾದವಿಲ್ಲ. ಅವನು ಅಶುದ್ಧ ಮಲದೇಹಿ. ಅವನ ಪೂಜಿಸಿದವಂಗೆ ರೌರವ ನರಕ ತಪ್ಪದೆಂದಾತ ನಿಮ್ಮ ಶರಣ ಚೆನ್ನಯ್ಯಪ್ರಿಯ ನಿರ್ಮಾಯಪ್ರಭುವೆ.
--------------
ಚೆನ್ನಯ್ಯ
ತನ್ನ ಲಿಂಗವ ಶಿಷ್ಯಂಗೆ ಬಿಜಯಂಗೈಸಿ ಕೊಟ್ಟು ಮುಂದೆ ತಾನೇನಾಗುವನೆಲವೊ ? ಅವನ ಧರ್ಮಕ್ಕೆ ಗುರುವಾದನಲ್ಲದೆ ಅವನ ಮನಕ್ಕೆ ಗುರುವಾದುದಿಲ್ಲ. ಹಿಂದಾದ ಮುಕ್ತಿಯ ಮಾರಿಕೊಂಡುಂಬ ಭಂಗಗಾರರ ತೋರದಿರಾ_ಕೂಡಲಚೆನ್ನಸಂಗಮದೇವಾ.
--------------
ಚನ್ನಬಸವಣ್ಣ
ದೂಷಕನವನೊಬ್ಬ ದೇಶವ ಕೊಟ್ಟಡೆ, ಆಸೆಮಾಡಿ ಅವನ ಹೊರೆಯಲಿರಬೇಡ. ಮಾದಾರ ಶಿವಭಕ್ತನಾದಡೆ, ಆತನ ಹೊರೆಯಲು ಭೃತ್ಯನಾಗಿಪ್ಪುದು ಕರ ಲೇಸಯ್ಯಾ, ತೊತ್ತಾಗಿಪ್ಪುದು ಕರ ಲೇಸಯ್ಯಾ. ಕಾಡ ಸೊಪ್ಪು ತಂದು ಓಡಿನಲ್ಲಿ ಹುರಿದಿಟ್ಟು, ಕೂಡಿಕೊಂಡಿಪ್ಪುದು ನಮ್ಮ ಕೂಡಲಸಂಗನ ಶರಣರ. 136
--------------
ಬಸವಣ್ಣ
ಅರಿದೆನು, ನಾನೇನ ಅರಿವಡೆ ಶೂನ್ಯನೆ ತೆರಹಿಲ್ಲದೊಂದು ಶುದ್ಧಘನತರವನು ನೆನಹಿನ ಮನೆಯಾಗಿ ಅವನ ನೋಟವೆ ಕೂಟ ಅವನೆನ್ನ ಕಾಯಕ್ಕೆ ಪ್ರಾಣನಾಗಿ ಪ್ರಾಣಪ್ರತಿಷ್ಠೆಯನು ತಾನು ಮಾಡುವ ರೂಪ ಶೂನ್ಯಕಾಯರು ಕಾಣಬಲ್ಲರೆ ಕಪಿಲಸಿದ್ಧಮಲ್ಲೇಶ್ವರನ?
--------------
ಸಿದ್ಧರಾಮೇಶ್ವರ
ಜಂಗಮವ ಕರತಂದು ಮನೆಯಲ್ಲಿ ಕುಳ್ಳಿರಿಸಿ, ಅಂಗದ ಮೇಲಣ ಜಪವನೆಣಿಸುವ ಭಕ್ತನ ಜಪದ ಬಾಯಲ್ಲಿ ಕೆರಹನಿಕ್ಕಲಿ! ಅವನ ಲಿಂಗಾರ್ಚನೆಯ ಬಾಯಲ್ಲಿ ಹುಡಿಯ ಹೊಯ್ಯಲಿ! ಜಂಗಮದ ತೃಪ್ತಿಯನರಿಯದೆ ಲಿಂಗವಂತನೆಂತಾದನೊ ? ಮರುಳೆ! ಅವ ಪಿಸುಣ, ಹೊಲೆಯನೆಂದಾತನಂಬಿಗರ ಚೌಡಯ್ಯ.
--------------
ಅಂಬಿಗರ ಚೌಡಯ್ಯ
ಪುಣ್ಯಾಂಗನೆಯ ಸುತಂಗೆ ಪಿತನುಂಟು, ಪಿತಾಮಹನುಂಟು, ಪ್ರಪಿತಾಮಹನುಂಟು. ಪಣ್ಯಾಂಗನೆಯ ಸುತಂಗೆ ಪಿತನಿಲ್ಲ, ಮೇಲೇನೂ ಇಲ್ಲ, ಅವನ ಬದುಕು ನಗೆಗೆಡೆ. ಭಕ್ತಾಂಗನೆಯ ಸುತನಹ ಸದ್ಭಕ್ತಂಗೆ ಪಿತನು ಗುರು, ಪಿತಾಮಹನು ಜಂಗಮ, ಪ್ರಪಿತಾಮಹನು ಮಹಾಲಿಂಗ ಉಂಟು ಕೇಳಿರಣ್ಣಾ. ಅಭಕ್ತಾಂಗನೆಯ ಸುತನಹ ತಾಮಸಭಕ್ತಂಗೆ ಪಿತನಹ ಗುರುವಿಲ್ಲ, ಪಿತಾಮಹ ಜಂಗಮವಿಲ್ಲ, ಪ್ರಪಿತಾಮಹ ಮಹಾಲಿಂಗವಿಲ್ಲ. ಅವನ ಸ್ಥಿತಿ ಗತಿ ನಗೆಗೆಡೆ ಕೇಳಿರಣ್ಣಾ, ಇದು ದೃಷ್ಟ ನೋಡಿರೆ. ಇದು ಕಾರಣ, ಭಕ್ತಿಹೀನನಾದ ಅಭಕ್ತಾಂಗನೆಯ ಮಗನ ಸಂಗವ ಬಿಡಿಸಿ ಸದ್ಭಕ್ತಿ ಸದಾಚಾರಸಂಪನ್ನರಪ್ಪ ಶರಣರ ಸಂಗದಲ್ಲಿರಿಸಯ್ಯಾ, ನಿಮ್ಮ ಬೇಡಿಕೊಂಬೆ ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರ.
--------------
ಉರಿಲಿಂಗಪೆದ್ದಿ
ಇಂತಪ್ಪ ನಿರ್ಣಯವನು ಸ್ವಾನುಭಾವ ಗುರುಮುಖದಿಂ ತಿಳಿದು ವಿಚಾರಿಸಿಕೊಳ್ಳದೆ, ಬ್ಥಿನ್ನಗುರುವಿನ ಕೈಯಲ್ಲಿ ಉಪದೇಶವ ಹಡದು, ಲಿಂಗವ ಪಡಕೊಂಡು ಗುರುಕಾರುಣ್ಯ ಉಳ್ಳವರೆಂದು ಲೋಕದ ಮುಂದೆ ಬೊಗಳುವ ಮೂಳಹೊಲೆಯರ ಕಟಬಾಯ ಸೀಳಿ ನಿಮ್ಮ ಗಣಂಗಳ ಪಾದರಕ್ಷೆಯಿಂದ ಹೊಡೆದಡೆ, ಎನ್ನ ಸಿಟ್ಟು ಮಾಣದು. ಅದೇನು ಕಾರಣವೆಂದಡೆ, ನೀವು ಪಡಕೊಂಡ ಗುರುವಿಗೆ ಗುರುಕಾರುಣ್ಯವಿಲ್ಲ. ಅವನ ಗುರುವಿಗೆ ಮುನ್ನವೇ ಗುರುಕಾರುಣ್ಯವಿಲ್ಲ. ನಿಮಗಿನ್ನಾವ ಕಡೆಯ ಗುರುಕಾರುಣ್ಯವೊ? ಎಲೆ ಮರುಳ ಮಾನವರಿರಾ ಗುರುಕಾರುಣ್ಯವಾದ ಬಳಿಕ ತನು-ಮನ-ಧನದಾಸೆ ಹಿಂದುಳಿದು ಗುರು-ಲಿಂಗ-ಜಂಗಮದಾಶೆ ಮುಂದುಗೊಂಡಿರಬೇಕು. ಗುರುಕಾರುಣ್ಯವಾದಡೆ ಆಣವಮಲ, ಮಾಯಾಮಲ, ಕಾರ್ಮಿಕಮಲಗಳ ಜರಿದು ಇಷ್ಟ-ಪ್ರಾಣ-ಭಾವದಲ್ಲಿ ಭರಿತವಾಗಬೇಕು. ಗುರುಕಾರುಣ್ಯವಾದಡೆ ಲಿಂಗವು ಆರಿಗೂ ತೋರದಿರಬೇಕು. ಇಷ್ಟುಳ್ಳಾತನೆ ಗುರುಕಾರುಣ್ಯ ಉಳ್ಳವನೆಂದನಯ್ಯಾ ನಿಮ್ಮ ಶರಣ ಕಾಡನೊಳಗಾದ ಶಂಕರಪ್ರಿಯ ಚನ್ನಕದಂಬಲಿಂಗ ನಿರ್ಮಾಯಪ್ರಭುವೆ.
--------------
ಕಾಡಸಿದ್ಧೇಶ್ವರ
ಗುರು-ಲಿಂಗ-ಜಂಗಮವೆಂದರಿಯದ ಗೊಡ್ಡುಗಳ ಶಿಷ್ಯನ ಮಾಡಿಕೊಂಬುವ ಹೆಡ್ಡಜಡಜೀವಿಗಳನೇನೆಂಬೆನಯ್ಯ ! ಆಚಾರ-ಅನಾಚಾರದ ಭೇದವನರಿಯದ ಹೆಡ್ಡ ಮಾನವರಿಗೆ ಉಪದೇಶವ ಕೊಡುವ ಮತಿಭ್ರಷ್ಟರನೇನೆಂಬೆನಯ್ಯ ! ಅವನ ಅಜ್ಞಾನವನಳಿಯದೆ, ಅವನ ನಡೆನುಡಿಯ ಹಸ ಮಾಡದೆ, ಅವನ ಆದಿ-ಅಂತ್ಯವ ತಿಳಿಯದೆ, ಧನಧಾನ್ಯದ್ರವ್ಯದಾಸೆಗೆ ಶಿವದೀಕ್ಷೆಯ ಮಾಡುವನೊಬ್ಬ ಗುರುವ ಹುಟ್ಟಂಧಕನೆಂಬೆನಯ್ಯ ! ತನ್ನ ಗುರುತ್ವವನರಿಯದ ಗುರುವಿಂದ ಉಪದೇಶವ ಪಡವನೊಬ್ಬ ಶಿಷ್ಯನ ಕೆಟ್ಟಗಣ್ಣವನೆಂಬೆನಯ್ಯ ! ಇಂತಿವರ ಗುರು-ಶಿಷ್ಯರೆಂದಡೆ ನಮ್ಮ ಪ್ರಮಥರು ಮಚ್ಚರಯ್ಯ ! ನಮ್ಮ ಪ್ರಮಥರು ಮಚ್ಚದಲ್ಲಿ ಇಂತಪ್ಪ ಗುರುಶಿಷ್ಯರಿಬ್ಬರಿಗೆಯೂ ಯಮದಂಡಣೆ ತಪ್ಪದೆಂದಾತನಂಬಿಗರ ಚೌಡಯ್ಯನು.
--------------
ಅಂಬಿಗರ ಚೌಡಯ್ಯ
ಬಾಲತ್ವದಲ್ಲಿ ತನ್ನ ಮಲಮೂತ್ರದೊಡನೆ ಹೊರಳಾಡಿ, ಯೌವನಪ್ರಾಯದಲ್ಲಿ ಮದಮತ್ಸರದಿಂದ ಹೋರಾಡಿ, ಕಾಮದಲ್ಲಿ ಕರಗಿ, ಕ್ರೋಧದಲ್ಲಿ ಕೊರದು, ಲೋಭ ಮೋಹದಿಂದ ಮಗ್ನರಾಗಿ, ಯೌವನಬಲಗುಂದಿ ಮುಪ್ಪುವರಿದು ಹಲ್ಲು ಬಿದ್ದು, ಕಣ್ಣು ಒಳನಟ್ಟು, ಬೆನ್ನು ಬಾಗಿ, ದಮ್ಮು ಹತ್ತಿ, ಗುರುಗೂರಿ ಗರಹತ್ತಿ, ಸಾಯುವ ಮನುಜರಿಗೆ, ವಿಭೂತಿ ವೀಳ್ಯೆ ಎಂದು ಮಾಡಿ, ಅವನ ಪಣೆಯಲ್ಲಿ ವಿಭೂತಿಯ ಧರಿಸಿ, ಸರ್ವಾಂಗದಲ್ಲಿ ವಿಭೂತಿ ಲೇಪನ ಮಾಡಿ, ಸ್ಥಾನಸ್ಥಾನಂಗಳಲ್ಲಿ ರುದ್ರಾಕ್ಷಿಯ ಧರಿಸಿ, ಅವನ ಮನೆಯಲ್ಲಿ ಶಿವಗಣಂಗಳು ಸಲಿಸಿ, ಅವನ ಮಸ್ತಕದ ಮೇಲೆ ಸಕಲ ಗಣಂಗಳು ತಮ್ಮ ಪಾದವನಿಟ್ಟು ಅವನ ಕೈಯಲ್ಲಿ ವಿಭೂತಿ ರುದ್ರಾಕ್ಷಿ ಬಿಲ್ವಪತ್ರಿ ಸುವರ್ಣ ಮೊದಲಾದ ಕಾಂಚನವ ಬ್ಥಿಕ್ಷವ ಕೊಂಡು ಅವನು ಸತ್ತುಹೋದ ಮೇಲೆ ಊರ ಹೊರಗಾಗಲಿ, ಊರೊಳಗಾಗಲಿ, ಲಿಂಗಸ್ಥಾಪನೆಯಿದ್ದ ಮಠಮಾನ್ಯದಲ್ಲಿ ಏಳುಪಾದ ನಿಡಿದು, ಏಳುಪಾದ ಉದ್ದ ಭೂಮಿಯ ಒಳಗೆ, ಐದುಪಾದ ಚೌಕು, ಮೂರುಪಾದ ಅಡ್ಡಗಲ, ಮೂರುಪಾದ ಒಳಯಕ್ಕೆ ತ್ರಿಕೋಣೆ. ಇಂತೀ ಕ್ರಮದಲ್ಲಿ ಕ್ರಿಯಾಸಮಾದ್ಥಿಯ ಮಾಡಿ, ಸುಣ್ಣ ಕೆಂಪುಮಣ್ಣಿನ ಸಾರಣೆಯ ಮಾಡಿ ರಂಗವಾಲಿಯ ತುಂಬಿ, ತಳಿರುತೋರಣವ ಕಟ್ಟಿ, ಕೋಣಿ ಕೋಣಿ ಸ್ಥಾನಕ್ಕೆ ಓಲೆಯ ಮೇಲೆ ಪ್ರಣಮವಂ ಬರೆದು ಆ ಸಮಾದ್ಥಿಯಲ್ಲಿ ಸಂಬಂದ್ಥಿಸಿ, ಮತ್ತಂ, ಅವನ ಶವಕ್ಕೆ ಹಾಗೆ ಪ್ರಣಮವಂ ಬರೆದು ಸಂಬಂದ್ಥಿಸಿ, ಸಂಚರಿಸಿ ಮೇಲೆ ಮೋಕ್ಷವಾಯಿತು ಎಂಬರಯ್ಯಾ; ಮೋಕ್ಷವಾಗಲರಿಯದು. ಅದೆಂತೆಂದಡೆ, ಇಂತಿವೆಲ್ಲವು ಹೊರಗಣ ಉಪಚಾರವು. ಈ ಉಪಚಾರದಿಂದ ಕರ್ಮದೋಷಗಳು ಹರಿದು ಪಿಶಾಚಿಯಾಗನು, ಭವ ಹಿಂಗದು. ಇಂತೀ ಕ್ರಮದಲ್ಲಿ, ಅಂತರಂಗದಲ್ಲಿ ಲಿಂಗಾಂಗಕ್ಕೆ ಸ್ವಾನುಭಾವಜ್ಞಾನಸೂತ್ರದಿಂ ಪ್ರಣವಸಂಬಂಧ ಮಾಡಿಕೊಂಡಡೆ ಅದೇ ಕ್ರಿಯಾಸಮಾದ್ಥಿ, ಗೋಮುಖಸಮಾದ್ಥಿ, ಮಹಾನಿಜ ಅಖಂಡ ಚಿದ್ಬಯಲಸಮಾದ್ಥಿ. ಇಂತಪ್ಪ ಸಮಾದ್ಥಿ ಉಳ್ಳವರಿಗೆ ಭವಬಂಧನ ಹಿಂಗಿ ಮುಂದೆ ಮೋಕ್ಷವಾಗುವದು ನೋಡೆಂದನಯ್ಯ ನಿಮ್ಮ ಕಾಡನೊಳಗಾದ ಶಂಕರಪ್ರಿಯ ಚನ್ನಕದಂಬಲಿಂಗ ನಿರ್ಮಾಯಪ್ರಭುವೆ.
--------------
ಕಾಡಸಿದ್ಧೇಶ್ವರ
ನಿಷ್ಠೆ ಘಟಿಸಿ ಕ್ರಿಯವಗ್ರಹಿಸಿ ಭಾವಭರಿತವಾಗಿ ಜ್ಞಾನವೆ ಅಂಗವಾಗಿ ಕ್ರಿಯೆ ಪ್ರಾಣವಾಗಿ, ಮತ್ತೆ ಜ್ಞಾನವೆ ಪ್ರಾಣವಾಗಿ ಕ್ರಿಯೆ ಅಂಗವಾಗಿ ಅಂಗಮನಕ್ರಿಭಾವ ಈ ಚತುರ್ವಿಧವೊಂದಾಗಿ, ಮತ್ತೆ ನಿಷ್ಠೆಘಟಿಸಿ ಕ್ರಿಜ್ಞಾನ ಎರಡ ವಿೂರಿನಿಂದ ಭಕ್ತವಿರಕ್ತನ ತೂರ್ಯದ ಕ್ರಿಯೆ ವೇಧಿಸಿ ನಿಂದವನ ನಿಲವು ಎಂತುಟೆಂದರೆ: ಕ್ರಿಯೆಂದರೆ ಇಷ್ಟಲಿಂಗ, ಅಂಗವೆಂದರೆ ಪ್ರಾಣಲಿಂಗ. ಆ ಪ್ರಾಣಲಿಂಗವ ಇಷ್ಟಲಿಂಗದಲ್ಲಡಗಿಸಿಕೊಂಡು ನಿಂದುದು ಎರಡಾಗಿ ಭಕ್ತನೆಂದು ಮಾಹೇಶ್ವರನೆಂದು ನಿಷ್ಠೆಯಲ್ಲಿ ನೆರೆನಿಂದಿರಲು ಮತ್ತಾ ನಿಷ್ಠೆಪಸರಿಸಿ ಆ ಭಕ್ತಮಾಹೇಶ್ವರರು ತಮ್ಮ ಮುನ್ನಿನ ನಿಷ್ಠೆಯ ಬಳಿಗೆ ಬಂದು ಎನ್ನಕ್ರಿ ನಿಮ್ಮಲ್ಲಿಯೇ ಅಡಗಿತ್ತು ಆ ಮುಕ್ತತ್ವದ ಕ್ರಿಯೊಳಗೊಂಡು ದೃಷ್ಟವ ಕಂಡು ಬರ....ಕೇಳಲಾಗಿ, ಎನ್ನ ಇಷ್ಟವಾಸರಿಸಿತ್ತೆಂದು ಹೇಳಲು ಸುಮ್ಮನೆ ಅವನ ಕೂಡೆ ಪ್ರಸಂಗಿಸಲಾಗದು. ಅದೇನು ಕಾರಣವೆಂದರೆ: ಮೊಟ್ಟ ಮೊದಲಲ್ಲಿ ಮೂರು ಭಿನ್ನವ ಕೇಳುವದು ಆ ಮೂರು ಭಿನ್ನಯೆಂತಾದವಯ್ಯಯೆಂದರೆ, ಅದರೊಳಗೈದು ಭಿನ್ನ ಉಂಟು. ಇಂತೀ ಎಂಟರೊಳಗೆ ನಾಲ್ಕು ಲಿಂಗದ ನೆಲೆ ಸಿಕ್ಕಿದರೆ ಅವೆಲ್ಲರಲ್ಲಿ ಬಂಧಿಸೂದು. ಅದಲ್ಲದೆ ನಿಂದರೆ ಮುಂದಣ ನಾಲ್ಕು ಅವನ ಭಾವವ ತೊರೆದು ನೋಡೂದು. ನೋಡಿ ನಿಶ್ಚಯವಾದ ಮತ್ತೆ ಕೂಡೆಯಿಟ್ಟುಕೊಂಡಿರ್ಪ ಸಮಯದಲ್ಲಿ, ಮೂಲಾಗ್ನಿಯ ಜ್ವಾಲೆಯಿಂದ ಮೇಲುವಾಯ್ದು ಒತ್ತಿಲಿರ್ದ ತನ್ನ ತೆತ್ತಿಗರ ನಿಲ್ಲದಂತೆ ನೀಕರಿಸುತ್ತಿರಲು, ಸಲಹಲಾರದ ತಾಯಿ ಶಿಶುವ ಬೈದು ಕೊಲುವಂತೆ ತಮ್ಮ ತ್ಯಾಗದ ಮೈಮರೆದಿರ್ದಾತನ ಎಚ್ಚರ ಮಾಡಿ, ನೀ ಮುನ್ನಲಿಂತಹವನೆಂದೆ ನುಡಿದು ಹೋಗುವ ನಿಷ್ಠೆ ಭಂಡರ ಗುಹೇಶ್ವರ ಸಾಕ್ಷಿಯಾಗಿ ಅಲ್ಲಯ್ಯನೊಲ್ಲ ಸಂಗನಬಸವಣ್ಣಾ.
--------------
ಅಲ್ಲಮಪ್ರಭುದೇವರು
ನಾನು ಮಜ್ಜನವ ಮಾಡುವುದಕ್ಕೆ ಮುನ್ನವೆ ಜಂಗಮಕ್ಕೆ ಮಜ್ಜನವ ಮಾಡಿಸುವೆ. ನಾನು ಸೀರೆಯನುಡುವುದಕ್ಕೆ ಮುನ್ನವೆ ಜಂಗಮಕ್ಕೆ ದೇವಾಂಗವನುಡಿಸುವೆ. ನಾನು ಪರಿಮಳವ ಲೇಪಿಸುವುದಕ್ಕೆ ಮುನ್ನವೆ ಜಂಗಮಕ್ಕೆ ಸುಗಂಧದ್ರವ್ಯಂಗಳ ಲೇಪಿಸುವೆ. ನಾನು ಅಕ್ಷತೆಯನಿಡುವುದಕ್ಕೆ ಮುನ್ನವೆ ಜಂಗಮಕ್ಕೆ ಅಕ್ಷತೆಯನಿಡುವೆ. ನಾನು ಪುಷ್ಪವ ಮುಡಿವುದಕ್ಕೆ ಮುನ್ನವೆ ಜಂಗಮಕ್ಕೆ ಪರಿಮಳಪುಷ್ಪವ ಮುಡಿಸುವೆ. ನಾನು ಧೂಪವಾಸನೆಯ ಕೊಳ್ಳುವ ಮುನ್ನವೆ ಜಂಗಮಕ್ಕೆ ಧೂಪವಾಸನೆಯ ಕೊಡುವೆ. ನಾನು ದೀಪಾರತಿಯ ನೋಡುವ ಮುನ್ನವೆ ಜಂಗಮಕ್ಕೆ ಆರತಿಯ ನೋಡಿಸುವೆ. ನಾನು ಸಕಲ ಪದಾರ್ಥಂಗಳ ಸ್ವೀಕರಿಸುವ ಮುನ್ನವೆ ಜಂಗಮಕ್ಕೆ ಮೃಷ್ಟಾನ್ನವ ನೀಡುವೆ. ನಾನು ಪಾನಂಗಳ ಕೊಳ್ಳುವ ಮುನ್ನವೆ ಜಂಗಮಕ್ಕೆ ಅಮೃತಪಾನಂಗಳ ಕೊಡುವೆ. ನಾನು ಕೈಯ ತೊಳೆಯುವ ಮುನ್ನವೆ ಜಂಗಮಕ್ಕೆ ಹಸ್ತಪ್ರಕ್ಷಾಲನವ ಮಾಡಿಸುವೆ. ನಾನು ವೀಳೆಯವ ಮಾಡುವುದಕ್ಕೆ ಮುನ್ನವೆ ಜಂಗಮಕ್ಕೆ ತಾಂಬೂಲವ ಕೊಡುವೆ. ನಾನು ಗದ್ದುಗೆಯ ಮೇಲೆ ಕುಳ್ಳಿರುವುದಕ್ಕೆ ಮುನ್ನವೆ ಜಂಗಮಕ್ಕೆ ಉನ್ನತಾಸನವನಿಕ್ಕುವೆ. ನಾನು ಸುನಾದಂಗಳ ಕೇಳುವುದಕ್ಕೆ ಮುನ್ನವೆ ಜಂಗಮಕ್ಕೆ ಸುಗೀತ ವಾದ್ಯಂಗಳ ಕೇಳಿಸುವೆ. ನಾನು ಭೂಷಣಂಗಳ ತೊಡುವುದಕ್ಕೆ ಮುನ್ನವೆ ಜಂಗಮಕ್ಕೆ ಆಭರಣಂಗಳ ತೊಡಿಸುವೆ. ನಾನು ವಾಹನಂಗಳನೇರುವುದಕ್ಕೆ ಮುನ್ನವೆ ಜಂಗಮಕ್ಕೆ ವಾಹಂಗಳನೇರಿಸುವೆ. ನಾನು ಮನೆಯೊಳಗಿಹುದಕ್ಕೆ ಮುನ್ನವೆ ಜಂಗಮಕ್ಕೆ ಗೃಹವಕೊಡುವೆ. ಇಂತೀ ಹದಿನಾರು ತೆರದಭಕ್ತಿಯನು ಚರಲಿಂಗಕ್ಕೆ ಕೊಟ್ಟು ಆ ಚರಲಿಂಗಮೂರ್ತಿ ಭೋಗಿಸಿದ ಬಳಿಕ ನಾನು ಪ್ರಸಾದ ಮುಂತಾಗಿ ಭೋಗಿಸುವೆನಲ್ಲದೆ ಜಂಗಮವಿಲ್ಲದೆ ಇನಿತರೊಳೊಂದು ಭೋಗವನಾದಡೂ ನಾನು ಭೋಗಿಸಿದೆನಾದಡೆ ನಿಮ್ಮಾಣೆ, ನಿಮ್ಮ ಪ್ರಮಥರಾಣೆ. ಇಂತೀ ಕ್ರಮದಲ್ಲಿ ನಡೆವಾತಂಗೆ ಗುರುವುಂಟು ಲಿಂಗವುಂಟು ಜಂಗಮವುಂಟು, ಪಾದೋದಕವುಂಟು ಪ್ರಸಾದವುಂಟು ಆಚಾರವುಂಟು ಭಕ್ತಿಯುಂಟು. ಈ ಕ್ರಮದಲ್ಲಿ ನಡೆಯದಾತಂಗೆ ಗುರುವಿಲ್ಲ ಲಿಂಗವಿಲ್ಲ ಜಂಗಮವಿಲ್ಲ ಪಾದೋದಕವಿಲ್ಲ ಪ್ರಸಾದವಿಲ್ಲಾಚಾರವಿಲ್ಲ ಭಕ್ತಿಯಿಲ್ಲ. ಅವನ ಬಾಳುವೆ ಹಂದಿಯ ಬಾಳುವೆ. ಅವನ ಬಾಳುವೆ ನಾಯ ಬಾಳುವೆ. ಅವನ ಬಾಳುವೆ ಕತ್ತೆಯ ಬಾಳುವೆ. ಅವನು ಸುರೆಮಾಂಸ ಭುಂಜಕನು, ಅವನು ಸರ್ವ ಚಾಂಡಾಲನಯ್ಯಾ ಚೆನ್ನಮಲ್ಲಿಕಾರ್ಜುನಾ.
--------------
ಅಕ್ಕಮಹಾದೇವಿ
ಉಕ್ಕುದ ಕೊಂಬನ್ನಬರ ಭೃತ್ಯಾಚಾರ ಭಕ್ತಂಗೆ. ಉಕ್ಕುದನಿಕ್ಕಿದಲ್ಲಿ ಅವನ ಅರ್ಥಪ್ರಾಣ ಅಬ್ಥಿಮಾನಕ್ಕೆ ತಪ್ಪುವನಾದಡೆ ಕರ್ತೃತ್ವ ಮೊದಲೆ ಕೆಟ್ಟಿತ್ತು, ಜಂಬುಕಫಲದ ನೇಮವ ಹಿಡಿದಂತಾಯಿತ್ತು, ಅದರಂಗವ ಕಂಡು ನಿಂದಿಸಿದ ಭಕ್ತಂಗೆ. ಬಾಗಿಲ ಪೂಜಿಸಿದ ಜಾರೆ ಲಕ್ಷಣದಂತಾಗಬೇಡ. ನೆರೆ ನಂಬು ಏನ ಹಿಡಿದಲ್ಲಿ, ಕಾಲಾಂತಕ ಬ್ಥೀಮೇಶ್ವರಲಿಂಗವನರಿಯಬಲ್ಲಡೆ.
--------------
ಡಕ್ಕೆಯ ಬೊಮ್ಮಣ್ಣ
ಕುಲಹೀನಶಿಷ್ಯಂಗೆ ಅನುಗ್ರಹವ ಕೊಟ್ಟು, ತನ್ನ ಪ್ರಾಣಲಿಂಗವ ನಿಕ್ಷೇಪಿಸಿ, ಕರ್ಣಮಂತ್ರವ ಹೇಳಿ, ಆ ಶ್ರೀಗುರು ಬಂದು, ಆ ಶಿಷ್ಯನ ಮನೆಯ ಹೊಗಲೊಲ್ಲದೆ, ಅಕ್ಕಿ ತುಪ್ಪವ ನೀ [ಡಿ]ಸಿಕೊಂಡುಂಬವನ ಕೇಡಿಂಗಿನ್ನೇವೆನಯ್ಯಾ ? ತನ್ನ ಪ್ರಾಣಲಿಂಗವನವರಿಗೆ ಕೊಟ್ಟು, ತಾ ಹೋಗೆನೆಂಬ ವ್ರತಗೇಡಿಗಿನ್ನೇವೆನಯ್ಯಾ ? ಅವನ ಧನಕ್ಕೆ ತಂದೆಯಾದನಲ್ಲದೆ, ಅವನ ಕುಲಕ್ಕೆ ತಂದೆಯಲ್ಲ. ಇದು ಕಾರಣ, ಮಹಾಲಿಂಗ ಕಲ್ಲೇಶ್ವರಾ, ಲಿಂಗವ ಮಾರಿಕೊಂಡುಂಬ ಭಂಗಗಾರರು ಕೆಟ್ಟ ಕೇಡನೇನೆಂಬೆನಯ್ಯಾ.
--------------
ಹಾವಿನಹಾಳ ಕಲ್ಲಯ್ಯ
ಇನ್ನಷ್ಟು ... -->