ಅಥವಾ

ಒಟ್ಟು 41 ಕಡೆಗಳಲ್ಲಿ , 24 ವಚನಕಾರರು , 36 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಈರೇಳು ಲೋಕವನೊಳಕೊಂಡ ಮಹಾಘನಲಿಂಗವು ಭಕ್ತನ ಕರಸ್ಥಲಕ್ಕೆ ಬಂದು ಪೂಜೆಗೊಂಬ ಪರಿಯ ನೋಡಾ. ಅಗಮ್ಯ ಅಗೋಚರ ಅಪ್ರಮಾಣ ಲಿಂಗಸಂಗದಲ್ಲಿ ಇರಬಲ್ಲಾತನೇ ಭಕ್ತನು. ಹೀಗಲ್ಲದೆ ಕೇಡಿಲ್ಲದೆ ಲಿಂಗಕ್ಕೆ ಕೇಡ ಕಟ್ಟಿ ಹೋದೀತೋ ಇದ್ದೀತೋ ಅಳಿದೀತೋ ಹೇಗೋ ಎಂತೋ ಎಂದು ಚಿಂತಿಸಿ ನುಡಿವರು ಬ್ಥಿನ್ನವಿಜ್ಞಾನಿಗಳು. ಆ ಲಿಂಗದೊಳಗೆ ಅಖಿಳಾಂಡಕೋಟಿ ಬ್ರಹ್ಮಾಂಡಗಳಡಗಿದವು. ಸಾಕ್ಷಿ : 'ಲಿಂಗಮಧ್ಯೇ ಜಗತ್ಸರ್ವಂ ತ್ರೈಲೋಕ್ಯಂ ಸಚರಾಚರಂ | ಲಿಂಗಬಾಹ್ಯಾತ್ ಪರಂ ನಾಸ್ತಿ ತಸ್ಮಾಲ್ಲಿಂಗಂ ಪ್ರಪೂಜಯೇತ್ ||' ಎಂದುದಾಗಿ, ಇಂತಪ್ಪ ಘನಲಿಂಗವ ಶ್ರೀಗುರು ಭಕ್ತಂಗೆ ಕರ-ಮನ-ಭಾವಕ್ಕೆ ಪ್ರತ್ಯಕ್ಷವಾಗಿ ಮಾಡಿಕೊಟ್ಟ ಬಳಿಕ ಎಂದಿಗೂ ಅಗಲಬೇಡಿಯೆಂದು ಗಣಸಾಕ್ಷಿಯಾಗಿ ಮಾಡಿಕೊಟ್ಟ ಬಳಿಕ ಅಗಲಲುಂಟೆ ? ಅಗಲಿದಡೆ ಲಿಂಗವು ಗುರುತಲ್ಪಕವೆ ಸರಿ. ಆವ ಶಾಸ್ತ್ರ ಆವ ಆಗಮ ಆವ ವಚನ ಹೇಳಿಲ್ಲವಾಗಿ, ಮತ್ತಂ, ಸಂಪಿಗೆಯ ಪುಷ್ಪದ ಪರಿಮಳ ಬೇರೆ ಆಗಲುಂಟೆ ? ಇಂತಪ್ಪ ಮಹಾಘನಲಿಂಗವು ಹೇಗಿಪ್ಪುದೆಂದಡೆ : ಅವರವರ ಮನ ಭಾವ ಹೇಗಿಪ್ಪುದೊ ಹಾಗಿಪ್ಪುದು. ಇದಕ್ಕೆ ದೃಷ್ಟಾಂತ : ಉದಕ ಒಂದೇ, ಹಲವು ವೃಕ್ಷದ ಹಣ್ಣು ಮಧುರ ಒಗರು ಖಾರ ಹುಳಿ ಕಹಿ ಸವಿ. ಉದಕ ಒಂದೇ, ಶ್ವೇತ ಪೀತ ಹರಿತ ಮಾಂಜಿಷ್ಟ ಕಪೋತ ಮಾಣಿಕ್ಯ. ಈ ಆರು ವರ್ಣಂಗಳಲ್ಲಿ ಬೆರೆದುದು ಅಭ್ರಕ ಒಂದೇ! ಈ ಅಭ್ರಕ ಹೇಗೊ ಹಾಗೆ ಮನ, ಹಾಗೆ ಮಹಾಲಿಂಗ. ಹೀಗೆಂದರಿದಾತ ನಮ್ಮ ಶಾಂತಕೂಡಲಸಂಗಮದೇವ ಬಲ್ಲನಲ್ಲದೆ ಬ್ಥಿನ್ನಜ್ಞಾನಿಗಳು ಎತ್ತ ಬಲ್ಲರು ನೋಡಾ!
--------------
ಗಣದಾಸಿ ವೀರಣ್ಣ
ಲಕ್ಷವಿಲ್ಲದ ವ್ರತ, ಕಟ್ಟಳೆಯಿಲ್ಲದ ನೇಮ, ಕೃತ್ಯವಿಲ್ಲದ ನಿತ್ಯ ಎಷ್ಟಾದಡುಂಟು, ಕಟ್ಟಳೆಗೊಳಗಾದವು ಅರುವತ್ತಾರು ಶೀಲ, ಅರುವತ್ತುನಾಲ್ಕು ನೇಮ, ಅಯಿವತ್ತುಮೂರು ನೇಮ, ಮೂವತ್ತೆರಡು ನಿತ್ಯ. ಇಂತಿವರ ಗೊತ್ತಿಗೊಳಗಾಗಿ ಕಟ್ಟಳೆಯಾಗಿ ನಡೆವಲ್ಲಿ ಅರ್ಥ ಪ್ರಾಣ ಅಭಿಮಾನಂಗಳಲ್ಲಿ, ತಥ್ಯಮಿಥ್ಯ ರಾಗದ್ವೇಷಂಗಳಲ್ಲಿ, ಭಕ್ತಿ ಜ್ಞಾನ ವೈರಾಗ್ಯಂಗಳಲ್ಲಿ, ಸ್ಥೂಲ ಸೂಕ್ಷ್ಮ ಕಾರಣ ತನುತ್ರಯಂಗಳಲ್ಲಿ, ಜರ ನಿರ್ಜರ ಸಮನ ಸುಮನಂಗಳಲ್ಲಿ, ಸರ್ವೇಂದ್ರಿಯ ಭಾವಭ್ರಮೆಗಳಲ್ಲಿ, ಐದು ತತ್ವದೊಳಗಾದ ಇಪ್ಪತ್ತಾರು ಕೂಟದಲ್ಲಿ, ಆತ್ಮವಾಯು ಒಳಗಾದವನ ವಾಯುವ ಬೆರಸುವಲ್ಲಿ, ಜಿಹ್ವೆದ್ವಾರದೊಳಗಾದ ಅಷ್ಟದ್ವಾರಂಗಳಲ್ಲಿ, ಇಂತೀ ಘಟದೊಳಗಾದ ಸಂಕಲ್ಪವೆಲ್ಲಕ್ಕೂ ಬಾಹ್ಯದಲ್ಲಿ ತೋರುವ ತೋರಿಕೆಗಳೆಲ್ಲಕ್ಕೂ ಹೊರಗೆ ಕ್ರೀ, ಆತ್ಮಂಗೆ ವ್ರತ. ಅವರವರ ತದ್ಭಾವಕ್ಕೆ ವ್ರತಾಚಾರವ ಮಾಡದೆ ಕಾಮಿಸಿ ಕಲ್ಪಿಸಿದೆನಾಯಿತ್ತಾದಡೆ, ಎನ್ನರಿವಿಂಗೆ ಅದೆ ಭಂಗ. ಆಚಾರವೆ ಪ್ರಾಣವಾದ ರಾಮೇಶ್ವರಲಿಂಗ ಸಹಿತಾಗಿಯೆ ಮಾಡುವೆನು
--------------
ಅಕ್ಕಮ್ಮ
ಪರಾತ್ಪರ ಚಿದ್ಬ್ರಹ್ಮಪರಶಿವಮೂರ್ತಿಯು ಮನು-ಮುನಿ, ಸಿದ್ಧ-ಸಾಧಕ, ಯಕ್ಷ-ರಾಕ್ಷಸ, ಯತಿ-ವ್ರತಿ, ಶೀಲ-ನೇಮಗಳ ಭಾವಾಭಾವಕ್ಕೆ ಮೆಚ್ಚಿ, ಅವರವರ ಕಾಂಕ್ಷೆಗಳಂತೆ ಫಲಪದದಾಯುಷ್ಯಕ್ಕೆ ಯೋಗ್ಯರಾಗಿ, ಅಷ್ಟಮಹದೈಶ್ವರ್ಯದಿಂದ ಬ್ರಹ್ಮನ ಉತ್ಪತ್ತಿ, ವಿಷ್ಣುವಿನ ಸ್ಥಿತಿ, ರುದ್ರನ ಲಯ, ಈಶ್ವರನ ತಿರೋಧಾನ, ಸದಾಶಿವನ ಅನುಗ್ರಹಕ್ಕೆ ಕಾರಣರಾಗಿ, ಶೈವಮಾರ್ಗದಿಂದೆ ನಿಜಮೋಕ್ಷವ ಕಾಣದೆ, ಅಷ್ಟಾವರಣದ ಚಿದ್ಬೆಳಗ ಸೇರಿದ ಸದ್ಭಕ್ತಿ-ಜ್ಞಾನ-ವೈರಾಗ್ಯ, ಸತ್ಯ-ಸದಾಚಾರವನರಿಯದೆ, ಇಹಲೋಕದ ಭೋಗವ ಪರಲೋಕದ ಮೋಕ್ಷಾಪೇಕ್ಷೆಯಿಂದ ಎಡೆಯಾಡುತ್ತ, ಪುಣ್ಯ-ಪಾಪ, ಸುಖ-ದುಃಖ, ಸ್ತುತಿ-ನಿಂದೆ, ಸಿರಿ-ದರಿದ್ರ. ಆಶೆ-ಆಮಿಷ, ರೋಗ-ರುಜಿನಗಳಿಂದ, ಶಿವನೆ ಹರನೆ ಭವನೆಯೆಂದು ಗೋಳಿಡುವವರಿಗೆ, ನಿರಾಕಾರಪರಿಪೂರ್ಣ ಪರಶಿವನು ಆಗಳು ಹಿಂದಾಗಿ, ಶಿವಗಣವ ಸೇರುವಂತೆ ಯೋಗಾಭ್ಯಾಸವ ತೋರಿ, ಅನಂತಮಣಿಮಾಲೆ ಜಪಕ್ರಿಯಾನುಷ್ಠಾನ ಮಂತ್ರ-ತಂತ್ರ-ಯಂತ್ರ-ಯಜ್ಞಾದಿಗಳ ಹೇಳಿ, ಪರಮಾರಾಧ್ಯ ನಿರವಯಪ್ರಭು ಮಹಾಂತನ ಗಣಾಚಾರಕ್ಕೆ ಅಯೋಗ್ಯರೆನಿಸಿರ್ಪರು ಕಾಣಾ ಸಿದ್ಧಮಲ್ಲಿಕಾರ್ಜುಲಿಂಗೇಶ್ವರ.
--------------
ಮೂರುಸಾವಿರ ಮುಕ್ತಿಮುನಿ
ಅಯ್ಯ! ಅಚ್ಚಪ್ರಸಾದಿ, ನಿಚ್ಚಪ್ರಸಾದಿ, ಸಮಯಪ್ರಸಾದಿಗಳೆಂದು ಒಪ್ಪವಿಟ್ಟು ನಿಚ್ಚ ನಿಚ್ಚ ನುಡಿವ ಅಣ್ಣಗಳಿರ! ನೀವು ಅಚ್ಚಪ್ರಸಾದ, ನಿಚ್ಚಪ್ರಸಾದ, ಸಮಯಪ್ರಸಾದವಾದ ವಿಚಾರವ ಹೇಳಿರಣ್ಣ! ಅರಿಯದಿರ್ದಡೆ ಕೇಳಿರಣ್ಣ! ಸಮಸ್ತಪದಾರ್ಥವ ಗುರುಲಿಂಗಜಂಗಮದಿಂದ ಪವಿತ್ರವ ಮಾಡಿ ಅವರವರ ಪದಾರ್ಥವ ಅವರವರಿಗೆ ವಂಚಿಸದೆ ನಿರ್ವಂಚಕತ್ವದಿಂದ ಸಮರ್ಪಿಸುವದೆ ತ್ರಿವಿಧಪ್ರಸಾದಸ್ವರೂಪು ನೋಡ! ಕ್ರಿಯಾಮುಖದಲ್ಲಿ ಇಷ್ಟಲಿಂಗಕ್ಕೆ ಸಮರ್ಪಿಸುವ ಪೃಥ್ವಿಸಂಬಂಧವಾದ, ಅಷ್ಟತನುಗಳಿಂದುದಯವಾದ, ಗಂಧರಸರೂಪುಸ್ಪರ್ಶನಶಬ್ದ ಮೊದಲಾದ ಸಮಸ್ತಪದಾರ್ಥಂಗಳ ಆ ಕ್ರಿಯಾಗುರುಲಿಂಗಜಂಗಮಕ್ಕೆ ಸಮರ್ಪಿಸಿ, ಅವರೊಕ್ಕುಮಿಕ್ಕ ರೂಪುರುಚಿತೃಪ್ತಿಪ್ರಸಾದವ ಭೋಗಿಸುವಾತನೆ ತ್ರಿವಿಧಪ್ರಸಾದಿ ನೋಡ! ಜ್ಞಾನಮುಖದಲ್ಲಿ ಪ್ರಾಣಲಿಂಗಕ್ಕೆ ಸಮರ್ಪಿಸುವ ಮನಸಂಬಂಧವಾದ ಸ್ತ್ರೀಯಳೆಂಬ ರೂಪುರುಚಿತೃಪ್ತಿ ಮೊದಲಾದ ಪದಾರ್ಥಂಗಳ ಸತ್ಕ್ರೀಯಾಗುರುಲಿಂಗಜಂಗಮವನೆ ಜ್ಞಾನಗುರುಲಿಂಗಜಂಗಮವೆಂದು ಭಾವಿಸಿ ತನ್ನ ವಿವಾಹಸಮಯದಲ್ಲಿ ಗುರುಲಿಂಗಜಂಗಮಕ್ಕೆ ಭಕ್ತಗಣಸಾಕ್ಷಿಯಾಗಿ ತನ್ನ ಕೂಟದ ಶಕ್ತಿಯ ಗುರುಲಿಂಗಜಂಗಮಕ್ಕೆ ಕೊಡುವ ಭಕ್ತಿ ಮೊದಲಾಗಿ, ಆ ಶಕ್ತಿಯರ ಅಂತರಂಗದಲ್ಲಿ ಬೆಳಗುವ ಪರಂಜ್ಯೋತಿರ್ಲಿಂಗವ ಬಹಿಷ್ಕರಿಸಿ ಸದ್ಗುರುಮುಖದಿಂ ಹಸ್ತಮಸ್ತಕಸಂಯೋಗವ ಮಾಡಿಸಿ, ಆ ಲಿಂಗಾಂಗಕ್ಕೆ ಪಾಣಿಗ್ರಹಣವ ಮಾಡಿಸಿ, ಮಂತ್ರದೀಕ್ಷೆಯ ಬೋದ್ಥಿಸಿ, ಪಾದೋದಕಪ್ರಸಾದವ ಕೊಡಿಸಿ, ಸದಾಚಾರ-ಸದ್ಭಕ್ತಿ-ಸತ್ಕ್ರೀಯಾ-ಸಮ್ಯಜ್ಞಾನವ ಬೋಧಿಸಿ, ಶಕ್ತಿಭಾರವಳಿದು ಕ್ರಿಯಾಶಕ್ತಿಯರೆಂದು ಭಾವಿಸಿ, ಪ್ರಥಮದಲ್ಲಿ ಗುರುಲಿಂಗಜಂಗಮಕ್ಕೆ ಆ ಕ್ರಿಯಾಶಕ್ತಿಯ ಭಕ್ತಗಣಸಾಕ್ಷಿಯಾಗಿ ಪ್ರಮಾಣದಿಂದ ಕಂಕಣವ ಕಟ್ಟಿ, ಶರಣಾರ್ಥಿಯೆಂದು ಒಪ್ಪದಿಂದ ಒಪ್ಪಿಸಿ, ಅದರಿಂ ಮೇಲೆ, ಆ ಗುರುಲಿಂಗಜಂಗಮದ ಕರುಣವ ಹಡೆದು, ಆ ಕ್ರಿಯಾಶಕ್ತಿಯ ಭಕ್ತಗಣಮಧ್ಯದಲ್ಲಿ ಕೂಡಿ, ಸೆರಗ ಹಿಡಿದು ಗಣಪದಕ್ಕೆ ಶರಣೆಂದು ವಂದಿಸಿ ಅವರ ಕರುಣವ ಹಾರೈಸಿ ನಿಜಭಕ್ತಿಜ್ಞಾನವೈರಾಗ್ಯವ ಬೆಸಗೊಂಡು ಸಚ್ಚಿದಾನಂದಲಿಂಗನಿಷ್ಠಾಪರತ್ವದಿಂದ ಗುರುಲಿಂಗಜಂಗಮಶಕ್ತಿ ಮೊದಲಾಗಿ ಗುರುಭಕ್ತಿಯಿಂದ ಆಚರಿಸುವರೆ ತ್ರಿವಿಧಪ್ರಸಾದಿಗಳು ನೋಡ! ಮಹಾಜ್ಞಾನಮುಖದಲ್ಲಿ ಭಾವಲಿಂಗಕ್ಕೆ ಸಮರ್ಪಿಸುವ ಧನಸಂಬಂಧವಾದ ದ್ರವ್ಯವನ್ನು ಆ ಕ್ರಿಯಾಜ್ಞಾನಯುಕ್ತವಾದ ಗುರುಲಿಂಗಜಂಗಮವನೆ ಮಹಾಜ್ಞಾನಗುರುಲಿಂಗಜಂಗಮವೆಂದು ಭಾವಿಸಿ, ತಾ ಧರಿಸುವಂಥ ವಸ್ತ್ರಾಭರಣರಕ್ಷೆ ಮೊದಲಾಗಿ ಪ್ರತಿಪದಾರ್ಥವ ವಿಚಾರಮುಖದಲ್ಲಿ ಪಾತ್ರಾಪಾತ್ರವ ತಿಳಿದು ಸಮರ್ಪಿಸಿ, ನಿಜನೈಷ್ಠೆಯಿಂದ, ಪರದ್ರವ್ಯವ ತಂದು ಗುರುಲಿಂಗಜಂಗಮವ ಒಡಗೂಡಿ ಋಣಭಾರಕ್ಕೊಳಗಾಗದೆ ನಡೆ ನುಡಿ ಒಂದಾಗಿ ಆಚರಿಸುವರೆ ತ್ರಿವಿಧಪ್ರಸಾದಿಗಳು ನೋಡ! ಈ ವಿಚಾರವ ಸದ್ಗುರುಮುಖದಿಂದ ಬೆಸಗೊಂಡು ಆಚರಿಸುವರೆ ಅಚ್ಚಪ್ರಸಾದಿ, ನಿಚ್ಚಪ್ರಸಾದಿ, ಸಮಯಪ್ರಸಾದಿ ನೋಡ! ಈ ವಿಚಾರವನರಿಯದೆ, ಶ್ರುತಿ-ಗುರು-ಸ್ವಾನುಭಾವವ ತಿಳಿಯದೆ, ವಾಚಾಳಕತ್ವದಿಂದ ನುಡಿದು, [ತಾವು] ಗುರುಲಿಂಗಜಂಗಮಪ್ರಸಾದಿಗಳೆಂಬ ಮೂಳರ ಬಾಯ ಮೇಲೆ ಗಣಂಗಳು ಮೆಟ್ಟಿದ ಚಮ್ಮಾವಿಗೆಯ ತೆಗೆದುಕೊಂಡು ಪಟಪಟನೆ ಹೊಡೆಯೆಂದಾತನಂಬಿಗರ ಚೌಡಯ್ಯನು ನೋಡ, ಸಂಗನ ಬಸವೇಶ್ವರ.
--------------
ಅಂಬಿಗರ ಚೌಡಯ್ಯ
ಕೃತಯುಕ ತ್ರೇತಾಯುಗ ದ್ವಾಪರಯುಗ ಕಲಿಯುಗಂಗಳಲ್ಲಿ ಬಸವನೆ ಭಕ್ತ, ಪ್ರಭುವೆ ಜಂಗಮವೆಂಬುದಕ್ಕೆ ಭಾವಭೇದವಿಲ್ಲವೆಂಬುದು ತಪ್ಪದು ನೋಡಯ್ಯಾ. ಕಲಿಯುಗದಲ್ಲಿ ಶಿವಭಕ್ತಿಯನು ಪ್ರಬಲವ ಮಾಡಬೇಕೆಂದು ಮತ್ರ್ಯಲೋಕಕ್ಕೆ ಇಳಿದು, ಶೈವಾಗಮಾಚಾರ್ಯ ಮಂಡಗೆಯ ಮಾದಿರಾಜನ ಸತಿ ಮಾದಾಂಬಿಕೆಯ ಗರ್ಭದಿಂದವತರಿಸಿದ. ಬಸವಣ್ಣನೆಂಬ ನಾಮಕರಣವಂ ಧರಿಸಿ, ಕೂಡಲಸಂಗಮದೇವರ ದಿವ್ಯ ಶ್ರೀಪಾದಪದ್ಮಾರಾಧಕನಾಗಿ, ಮತ್ರ್ಯಕ್ಕೆ ಪ್ರತಿಕೈಲಾಸವೆಂಬ ಕಲ್ಯಾಣಮಂ ಮಾಡಿ, ತನ್ನ ಪರೀಕ್ಷೆಗೆ ಬಿಜ್ಜಳನೆಂಬ ಒರೆಗಲ್ಲ ಮಾಡಿ, ಆ ಸದ್ಭಕ್ತಿ ಬಿನ್ನ[ಹ]ವನು ಒರೆದೊರೆದು ನೋಡುವ ಕೊಂಡೆಯ ಮಂಚಣ್ಣಗಳ ಪುಟ್ಟಿಸಿದ ಬಸವಣ್ಣ. ಕಪ್ಪಡಿಯ ಸಂಗಯ್ಯದೇವರ ಸ್ವಹಸ್ತದಿಂದಲುಪದೇಶಮಂ ಪಡೆದು ಸರ್ವಾಚಾರಸಂಪನ್ನನಾಗಿ ಇರುತ್ತಿರೆ, ಶಿವನಟ್ಟಿದ ನಿರೂಪಮಂ ಓದಿ, ಅರವತ್ತುಕೋಟಿ ವಸ್ತುವಂ ತೆಗೆಸಿ, ಬಿಜ್ಜಳಂಗೆ ದೃಷ್ಟಮಂ ತೋರಿ, ಶಿರಪ್ರಧಾನನಾಗಿ, ಶಿವಾಚಾರ ಶಿರೋಮಣಿಯಾಗಿ, ಏಳುನೂರಯೆಪ್ಪತ್ತು ಅಮರಗಣಂಗಳಿಗೆ ಪ್ರಥಮದಂಡನಾಯಕನಾಗಿ, ಗುರುಲಿಂಗಜಂಗಮಕ್ಕೆ ತನುಮನಧನವಂ ನಿವೇದಿಸಿ, ಅನವರತ ಶಿವಗಣ ತಿಂಥಿಣಿಯೊಳು ಓಡಾಡುತ್ತಿಪ್ಪ ಆ ಬಸವಣ್ಣ, ಲಕ್ಷದ ಮೇಲೆ ತೊಂಬತ್ತಾರು ಸಾವಿರ ಜಂಗಮದ ಪಾದೋದಕ ಪ್ರಸಾದದಲ್ಲಿ ನಿಯತನಾಗಿ, ಅವರವರ ನೇಮದಿಚ್ಫೆಗಳು ಸಲಿಸಿ, ಒಲಿದು ಮಾಡುವ ದಾಸೋಹದ ಪರಿಯೆಂತೆಂದಡೆ : ಹಾಲನೇಮದವರು ಹನ್ನೆರಡುಸಾವಿರ. ಘಟ್ಟಿವಾಲ ನೇಮದವರು ಹನ್ನೆರಡುಸಾವಿರ. ಪಂಚಾಮೃತಗಳ ಒಲಿದು ಲಿಂಗಕ್ಕೆ ಸಲಿಸುವ ನೇಮದವರು ಹನ್ನೆರಡುಸಾವಿರ. ಕಟ್ಟುಮೊಸರ ನೇಮದವರು ಹನ್ನೆರಡುಸಾವಿರ. ಘಟ್ಟಿದುಪ್ಪದ ನೇಮದವರು ಆರುಸಾವಿರ. ತಿಳಿದುಪ್ಪದ ನೇಮದವರು ಆರುಸಾವಿರ. ಚಿಲುಮೆಯಗ್ಘವಣಿಯ ನೇಮದವರು ಹನ್ನೆರಡುಸಾವಿರ. ಪರಡಿ ಸಜ್ಜಿಗೆಯ ನೇಮದವರು ಹನ್ನೆರಡುಸಾವಿರ ಕಟ್ಟುಮಂಡಗೆಯ ನೇಮದವರು ಹನ್ನೆರಡುಸಾವಿರ. ಎಣ್ಣೆಹೂರಿಗೆಯ ನೇಮದವರು ಹನ್ನೆರಡುಸಾವಿರ. ವಡೆ ಘಾರಿಗೆಯ ನೇಮದವರು ಹನ್ನೆರಡುಸಾವಿರ. ಹಾಲುಂಡೆ ಲಡ್ಡುಗೆಯ ನೇಮದವರು ಹನ್ನೆರಡುಸಾವಿರ. ತವರಾಜ ಸಕ್ಕರೆಯ ನೇಮದವರು ಹನ್ನೆರಡುಸಾವಿರ. ಷಡುರಸಾಯನದ ನೇಮದವರು ಹನ್ನೆರಡುಸಾವಿರ. ದ್ರಾಕ್ಷೆ ಮಾವು, ಖರ್ಜೂರ, ಹಲಸು, ದಾಳಿಂಬ ಇಕ್ಷುದಂಡ ಕದಳಿ ಮೊದಲಾದ ಫಲದ್ರವ್ಯಂಗಳ ನೇಮದವರು ಹನ್ನೆರಡುಸಾವಿರ. ಸಪ್ಪೆಯ ನೇಮದವರು ಹನ್ನೆರಡುಸಾವಿರ. ಸರ್ವದ್ರವ್ಯಂಗಳ ನೇಮದವರು ಹನ್ನೆರಡುಸಾವಿರ. ಸಮಯಾಚಾರ ಸಹಿತ ಲಿಂಗಾರ್ಚನೆ ಮಾಡುವ ನಿತ್ಯನೇಮಿಗಳು ಹದಿನಾರುಸಾವಿರ. ಇಂತು ಎಡೆಬಿಡುವಿಲ್ಲದೆ ಲಿಂಗಾರ್ಚನೆಯ ಮಾಡುವ ಜಂಗಮ ಲಕ್ಷದ ಮೇಲೆ ತೊಂಬತ್ತಾರು ಸಾವಿರ. ಆ ಬಸವಣ್ಣನ ಸಮಯಾಚಾರದಲ್ಲಿ ಕುಳ್ಳಿರ್ದು, ಲಿಂಗಾರ್ಚನೆಯ ಮಾಡುವ ಸಮಯಾಚಾರಿಗಳು ಮೂವತ್ತಾರು ಸಾವಿರ. ಅಂತು ಎರಡುಲಕ್ಷ ಮೂವತ್ತೆರಡು ಸಾವಿರ ಶಿವಗಣತಿಂಥಿಣಿಗೆ ಒಲಿದು ದಾಸೋಹಮಂ ಮಾಡುತ್ತ, ಪ್ರಸಾದ ಪಾದೋದಕದೊಳೋಲಾಡುತ್ತ, ಸುಖಸಂಕಧಾವಿನೋದದಿಂದ ಭಕ್ತಿಸಾಮ್ರಾಜ್ಯಂಗೆಯ್ವುತ್ತಿರಲು, ಶಿವಭಕ್ತಿಕುಲಕತಿಲಕ ಶಿವಭಕ್ತಿ ಶಿರೋಮಣಿಯೆಂಬ ಚೆನ್ನಬಸವಣ್ಣನವತರಿಸಿ ಶೈವಮಾರ್ಗಮಂ ಬಿಡಿಸಿ, ಪ್ರಾಣಲಿಂಗ ಸಂಬಂಧಮಂ ತೋರಿಸಿ, ಸರ್ವಾಂಗ ಶಿವಲಿಂಗ ಪ್ರಾಣಪ್ರಸಾದ ಭೋಗೋಪಭೋಗದ ಭೇದಮಂ ತೋರಿಸಿ, ದಾಸೋಹದ ನಿರ್ಣಯಮಂ ಬಣ್ಣವಿಟ್ಟು ಬೆಳಗಿ ತೋರಿ, ಪಾದೋದಕ ಪ್ರಸಾದಮಂ ಕೊಳ ಕಲಿಸಿ, ಗುರುಲಿಂಗಜಂಗಮದ ಘನಮಂ ತೋರಿಸಿ, ಶರಣಸತಿ ಲಿಂಗಪತಿಯೆಂಬುದಂ ಸಂಬಂಧಿಸಿ ತೋರಿ, ಭಕ್ತ ಮಾಹೇಶ್ವರ ಪ್ರಸಾದಿ ಪ್ರಾಣಲಿಂಗಿ ಶರಣೈಕ್ಯನೆಂಬ ಷಡುಸ್ಥಲಮಂ ಸರ್ವಾಂಗದೊಳು ಪ್ರತಿಷಿ*ಸಿ ತೋರಿ ಸಲಹಿದ ಚೆನ್ನಬಸವಣ್ಣನ ತನ್ನಲ್ಲಿ ಇಂಬಿಟ್ಟುಕೊಂಡು, ಅಚ್ಚಪ್ರಸಾದಿಯಾಗಿ ಸತ್ಯಪ್ರಸಾದಿಯಾಗಿ ಸಮಯಪ್ರಸಾದಿಯಾಗಿ, ಸಂತೋಷಪ್ರಸಾದಿಯಾಗಿ ಸರ್ವಾಂಗಪ್ರಸಾದಿಯಾಗಿ, ಸಮರಪ್ರಸಾದಿಯಾಗಿ, ನಿರ್ಣಯದಲ್ಲಿ ನಿಷ್ಪನ್ನನಾಗಿ, ನಿಜದಲ್ಲಿ ನಿವಾಸಿಯಾಗಿ, ನಿರಾಳಕ್ಕೆ ನಿರಾಳನಾಗಿ, ಘನದಲ್ಲಿ ಅಗಮ್ಯನಾಗಿ, ಅಖಂಡ ಪರಿಪೂರ್ಣನಾಗಿ, ಉಪಮೆಗೆ ಅನುಪಮನಾಗಿ, ವಾಙ್ಮನಕ್ಕಗೋಚರನಾಗಿ, ಭಾವ ನಿರ್ಭಾವವೆಂಬ ಬಗೆಯ ಬಣ್ಣಕ್ಕೆ ಅತ್ತತ್ತಲೆಂದೆನಿಸಿ ನಿಃಶೂನ್ಯನೆಂದೆನಿಸಿಪ್ಪ ಸಂಗನಬಸವಣ್ಣನ ತೊತ್ತಿನ ತೊತ್ತಿನ ಮರುದೊತ್ತಿನ ಮಗ ನಾನು ಕಾಣಾ ಪ್ರಭುವೆ, ಕಲಿದೇವರದೇವ.
--------------
ಮಡಿವಾಳ ಮಾಚಿದೇವ
ಎಂಟು ಯೋಗ ಆರು ಭೇದ ಮೂರು ಬಟ್ಟೆ ಐದು ಮುಟ್ಟು ಈರೈದು ಹಾದಿ ಹದಿನಾರು ಸಂಗ ನಾಲ್ಕು ಮೆಟ್ಟು ಎರಡುಸಂಚಾರ ಒಂದರ ಕಟ್ಟಿನಲ್ಲಿ ಮುಟ್ಟುಮಾಡಿ ನಿಲಿಸಿ, ದೃಷ್ಟದ ಇಷ್ಟದಲ್ಲಿ ಬೈಚಿಟ್ಟು, ಅವರವರ ಸ್ವಸ್ಥಾನದ ಕಟ್ಟಣೆಯಲ್ಲಿ ವಿಶ್ರಮಿಸಿ ಆ ಚಿತ್ತವ ಆ ಚಿತ್ತು ಒಡಗೂಡಿ ಇಪ್ಪುದೆ ಕ್ರಿಯಾಪಥಲಿಂಗಾಂಗಯೋಗ. ಇದನರಿಯದೆ ಮಾಡುವ ಯೋಗವೆಲ್ಲವೂ ತನ್ನಯ ಭವರೋಗ, ಶಂಭುವಿನಿಂದಿತ್ತ ಸ್ವಯಂಭುವಿನಿಂದತ್ತ ಅತಿಬಳ ನೋಡಾ, ಮಾತುಳಂಗ ಮಧುಕೇಶ್ವರನು.
--------------
ದಾಸೋಹದ ಸಂಗಣ್ಣ
ಅಹಿ ಕ್ರೂರಮೃಗಂಗಳೆಲ್ಲಕ್ಕೂ ಬಾಯಿಕಟ್ಟಿಂದ ಕಚ್ಚವು ಫಲಂಗಳ, ಹೊಲದಲ್ಲಿದ್ದಡೂ ಆ ಹೊಲದ ಸೀಮೆಯ ಫಲವನೊಲ್ಲದ ತೆರದಿಂದ ಕಡೆಯೆ ನಿಮ್ಮ ಹೊಲಬಿನ ಹೊಲ ? ಗುರುಭಕ್ತನಾದಡೆ ಗುರು ಆಜ್ಞೆ ತಪ್ಪದೆ ಲಿಂಗಭಕ್ತನಾದಡೆ ಅರ್ಚನೆ, ಪೂಜನೆ, ನಿತ್ಯ ನೇಮ ಕೃತ್ಯಂಗಳು ತಪ್ಪಡೆ, ಜಂಗಮಭಕ್ತನಾದಡೆ ಆಪ್ಯಾಯನದ ಅನುವಿಷಯದ ಡಾವರ ಆಶೆಯ ಪಾಶದ ಪರಿಭ್ರಮಣವನರಿತು ಸುಖಿಯಲ್ಲದೆ, ದುಃಖಿಯಲ್ಲದೆ ಬಂದಂತೆ ಬಾಯಿಗರೆಯದೆ, ಕಂಡುದ ಬೇಡದೆ, ನಿಂದೆಗೆಡೆಗೊಡದೆ ನಿಜಲಿಂಗಾಂಗಿಯನರಿದು ಭಕ್ತಿಗೆ ಊಣಿಯವಿಲ್ಲದೆ ಅವರವರ ಒಪ್ಪಕ್ಕೆ ತಕ್ಕ ಚಿತ್ತವಿದ್ದು ಮಾಡುತ್ತಿಪ್ಪ ಭಕ್ತನ ಬಾಗಿಲೆ ಸದ್ಯೋಜಾತಲಿಂಗವ ಕಾಬುದಕ್ಕೆ ಕಾಹಿಲ್ಲದ ಪಥ.
--------------
ಅವಸರದ ರೇಕಣ್ಣ
ಬಹುಜನಂಗಳೆಲ್ಲಾ ಓಲಗವಿಲ್ಲ ಹೋಗಿ, ಸಲಿಗೆವಂತರಲ್ಲಿಲ್ಲ ನಿಲ್ಲಿ. ಕಾಂತ ಸಂಬಂಧರು ಹೋಗಿ, ಲೋಕಾಂತ ಭಂಡರು ನಿಲ್ಲಿ. ಇಂತೀ ಅವರವರ ಸ್ವಸ್ಥಾನಂಗಳ ಸಲುಗೆಯನರಿದುಬಿಡುತ್ತಿದ್ದೇನೆ, ಕೂಡಲಸಂಗಮದೇವರಲ್ಲಿ ಬಸವಣ್ಣನ ಕಾಲವೇಳೆಯನರಿದು.
--------------
ಉಗ್ಘಡಿಸುವ ಗಬ್ಬಿದೇವಯ್ಯ
ಘನಮಹಿಮ ಶರಣರು ತನ್ನ ಮನೆಗೆ ಗಮನಿಸಿ ಬಂದರೆ, ಅನುವರಿದು ಅವರವರ ಒಡವೆಯ ಅವರವರಿಗಿತ್ತು ವಿನಯ ಮುಂದುಗೊಂಡಿಪ್ಪುದೇ ಸಹಜ. ಒರೆದು ನೋಡಬಂದ ಹಿರಿಯರ ಗರ್ಜನೆಯನು ಸೈರಣೆಯೊಳರ್ಚಿಸಿ, ಸಾವಧಾನಸಖತನ ಮುಂದುಗೊಂಡಿಪ್ಪುದೇ ನಿಜಭಕ್ತಿ. ಕೊಂಡು ಮಾಡಬಲ್ಲ ಪ್ರಚಂಡ ಒಡೆಯರಡಿಯಿಟ್ಟು ಬಂದರೆ ತಡವಿಲ್ಲದರಿದು, ಒಡನಿರ್ದ ಧನವ ವಂಚನೆಯನರಿಯದೆ ಈವುದು ಗುರುನಿರಂಜನ ಚನ್ನಬಸವಲಿಂಗಕ್ಕೆ ಅಭಿನ್ನಭಕ್ತಿ.
--------------
ದೇಶಿಕೇಂದ್ರ ಸಂಗನಬಸವಯ್ಯ
ಅಯ್ಯ, ಶ್ರೀಗುರುಲಿಂಗಜಂಗಮವೇ ರುದ್ರಲೋಕದ ರುದ್ರಗಣಂಗಳಿಗೆ, ಶಾಂಭವಲೋಕದ ಶಾಂಭವಗಣಂಗಳಿಗೆ, ನಾಗಲೋಕದ ನಾಗಗಣಂಗಳಿಗೆ, ದೇವಲೋಕದ ದೇವಗಣಂಗಳಿಗೆ, ಮರ್ತೃಲೋಕದ ಮಹಾಗಣಂಗಳಿಗೆ ಅವರವರ ಮನ-ಭಾವ-ಕಾರಣಂಗಳು ಹೇಗುಂಟೊ ಹಾಂಗೆ ಆಯಾಯ ಪ್ರಸನ್ನೇತಿ ಪ್ರಸಾದವಾಗಿರ್ಪರು ನೋಡ. ಸ್ವರ್ಗ-ಮರ್ತೃ-ಪಾತಾಳಲೋಕದಲ್ಲಿ ಚರಿಸುವ ಹÀರಿಸುರಬ್ರಹ್ಮಾದಿ ದೇವದಾನವಮಾನವ ಮನಮುನಿಗಳೆಲ್ಲ ಅತ್ಯತಿಷ*ದ್ದಶಾಂಗುಲವೆಂದು ಹೊಗಳುವ ಶ್ರುತಿಯಂತೋ ಹಾಂಗೆ ಅವರವರ ಮನದಂತೆ ಮಹಾದೇವನಾಗಿ ಫಲಪದಂಗಳ ಕೊಟ್ಟು, ದುಷ್ಟನಿಗ್ರಹ ಶಿಷ್ಟಪ್ರತಿಪಾಲಕತ್ವದಿಂದ ಸರ್ವಲೋಕಂಗಳಿಗೆಲ್ಲ ಸೂತ್ರಧಾರಿಗಳಾಗಿರ್ಪರು ನೋಡ. ಇಂತು ಏಕಮೇವ ಪರಬ್ರಹ್ಮವೆಂಬ ಶ್ರುತಿಯ ದಿಟವಮಾಡಿ ಪರಮಸ್ವಸ್ಥಿರದ ಮಂಡಲದ ಮೇಲೆ ಶಿವ-ಶಕ್ತಿ, ಅಂಗ-ಲಿಂಗವೆಂಬ ಉಭಯನಾಮವಳಿದು ಶಿಷ್ಯರೂಪಿನಿಂದ ಕುಳ್ಳಿರಿಸಿ ದೀಕ್ಷಾಪಾದೋದಕ ಮಿಶ್ರವಾದ ಗೋಮೂತ್ರದಿಂದ ಸಪ್ತವ್ಯಸನ ಸಂಬಂಧವಾದಂಗ, ಸಪ್ತಧಾತುಸಂಬಂಧವಾದ ಲಿಂಗ, ಇಂತು ಅಂಗದ ಮಲಿನಭಾವ, ಲಿಂಗದ ಶಿವಭಾವವ ಕಳದು, ಕ್ಷೀರ, ಘೃತ, ರಂಭಾ, ಇಕ್ಷು, ಮಧುಯುಕ್ತವಾದ ರಸಪಂಚಾಮೃತವ ಜಂಗಮಚರಣೋದಕ ಮಿಶ್ರದಿಂದ ಅಭಿಷೇಕಮಾಡಿಸಿ, ಅದರಿಂ ಮೇಲೆ ಗುರುಪಾದೋದಕದಲ್ಲಿ ಶರಣಗಣಂಗಳು ಹಸ್ತೋದಕ, ಮಂತ್ರೋದಕ, ಶುದ್ಧೋದಕ, ಗಂಧೋದಕ, ಪುಷ್ಪೋದಕವೆಂಬ ಪಂಚಪರಮಾನಂದ ಜಲದಿಂದ ಅಭ್ಯಂಗಸ್ನಾನ ಮಾಡಿಸಿ, ಹಿಂದು-ಮುಂದಣ ಕಾಲಕಾಮರ ಭಯಕ್ಕೆ ಅಂಜಬೇಡವೆಂದು ತ್ರಿವಿಧಂಗುಲಪ್ರಮಾಣವಾದ ದರ್ಭೆಯ ಅಂತು ಮಾಡಿ ತ್ರಿವಿಧಮಂತ್ರಸ್ಮರಣೆಯಿಂದ ಕಟಿಯಲ್ಲಿ ಧರಿಸಿದರಯ್ಯ. ಆರುವೈರಿಗಳಿಗೆ ಒಳಗಾಗಬೇಡವೆಂದು ಷಡಂಗುಲಪ್ರಮಾಣವಾದ ರಂಭಾಪಟ್ಟೆಯ ಕೌಪೀನವ ಮಾಡಿ ಷಡಕ್ಷರಮಂತ್ರಸ್ಮರಣೆಯಿಂದ ಹರಿಯಜದ್ವಾರಗಳ ಬಂಧಿಸಿದರಯ್ಯ. ಅದರಿಂದ ಮೇಲೆ ನಾರಂಗಶಾಟಿಯ ಪವಿತ್ರತೆಯಿಂ ಹೊದ್ದಿಸಿ, ಶ್ರೀ ಗುರುದೇವನ ಚರಣಕಮಲಕ್ಕೆ ಅಷ್ಟಾಂಗಪ್ರಣಿತನ ಮಾಡಿಸಿ, ಶಿವಶರಣ ಭಕ್ತ ಮಾಹೇಶ್ವರರುಗಳಿಗೆ ಹುಸಿಯ ನುಡಿಯದೆ, ದಿಟವ ಬಿಡದೆ, ಆಪ್ತತ್ವದಿಂದ ನಡೆ-ನುಡಿ, ಕೊಟ್ಟುಕೊಂಬ ವಿಚಾರಂಗಳ ಶ್ರುತಮಾಡಿದಲ್ಲಿ ಶ್ರೀ ಗುರುದೇವನು ಶರಣಗಣ ಒಪ್ಪಿಗೆಯಿಂದ ಶಿಷ್ಯನ ಮಸ್ತಕದ ಮೇಲೆ ಅಭಯಹಸ್ತವನ್ನಿಟ್ಟು, ಗುರುಶಿಷ್ಯಭಾವವಳಿದು, ಗುರುವಿನ ಸೂತ್ರದ ಶಿಷ್ಯಹಿಡಿದು, ಶಿಷ್ಯನ ಸೂತ್ರವ ಗುರುವು ಹಿಡಿದು, ಅಂತರಂಗಬಹಿರಂಗದಲ್ಲಿ ಶಿವಯೋಗಾನುಸಂಧಾನದಿಂದ ಏಕರೂಪವಾಗಿ ಭೃತ್ಯರಿಂದ ಕಳಸಾರ್ಚನೆಯ ರಚಿಸಿ, ಪ್ರಮಥಗಣಾರಾಧ್ಯ ಭಕ್ತಮಾಹೇಶ್ವರರೊಡಗೂಡಿ ನವರತ್ನಖಚಿತವಾದ ಶೂನ್ಯಸಿಂಹಾಸನದ ಮೇಲೆ ಮೂರ್ತಿಗೊಂಡಿರುವಂಥ ಮಂತ್ರಮೂರ್ತಿ ನಿರಂಜನಜಂಗಮಕ್ಕೆ ವಿಭೂತಿ ವೀಳ್ಯ, ಸುವರ್ಣಕಾಣಿಕೆ, ದಶಾಂಗಘನಸಾರ, ಪುಷ್ಪದಮಾಲೆ, ವಸ್ತ್ರಾಭರಣ ಮೊದಲಾಗಿ ಸಪ್ತಪದಾರ್ಥಂಗಳ ಪ್ರಮಥಗಣಾರಾಧ್ಯ ಭಕ್ತಮಾಹೇಶ್ವರ ಮಧ್ಯದಲ್ಲಿ ಇಟ್ಟು ಅಷ್ಟಾಂಗಯುಕ್ತರಾಗಿ ಸ್ವಸ್ಥದೃಢಚಿತ್ತದಿಂದ ಬಹು ಪರಾಕು ಭವರೋಗ ವೈದ್ಯನೆ ಎಂದು ತ್ರಿಕರಣಶುದ್ಧತಿಯಿಂದ ಅಭಿವಂದಿಸುವಂಥಾದ್ದೆ ಸ್ವಸ್ತಿಕಾರೋಹಣದೀಕ್ಷೆ. ಇಂತುಟೆಂದು ಶ್ರೀ ಗುರುನಿಷ್ಕಳಂಕಮೂರ್ತಿ ಚೆನ್ನಬಸವರಾಜೇಂದ್ರನು ನಿರ್ಲಜ್ಜಶಾಂತಲಿಂಗದೇಶಿಕೋತ್ತಮಂಗೆ ನಿರೂಪಮಂ ಕೊಡುತಿರ್ದರು ನೋಡ ಸಂಗನಬಸವೇಶ್ವರ.
--------------
ಗುರುಸಿದ್ಧದೇವರು
ವೇಷಮಾತಿನ ಬಿನ್ನಾಣಿಗಳಿಗೆ ಗ್ರಾಸ ಉಂಟಲ್ಲದೆ ನಿಜವಿಲ್ಲ. ಇಂತೀ ಉಭಯವನತಿಗಳೆದ ನಿರತಿಶಯ ಲಿಂಗಾಂಗಿಗೆ ಗ್ರಾಸದಾಸೆಯಿಲ್ಲ. ಸರ್ವಸುಖದಾಲಯದ ಪಾಶದ ಕಟ್ಟಿಲ್ಲ. ಅವರವರ ಕಂಡಲ್ಲಿಯೆ ಸುಖಿ, ನಿಧಾನಿಸಿ ಕೂಡಿದಲ್ಲಿಯೆ ತೃಪ್ತ. ಆತ ತ್ರಿವಿಧಮಲದ ಹಂಗಿನವನಲ್ಲ. ಗ್ರಾಮ ನಿಳಯ ಬಂಧಂಗಳಿಲ್ಲ. ಮಾತಿನ ರಚನೆಯ ಪಾಶವನೊಲ್ಲ. ಆತ ಸರ್ವಾಂಗಲಿಂಗ ಸನ್ಮತ. ನಿಃಕಳಂಕ ಮಲ್ಲಿಕಾರ್ಜುನನ ಒಡಗೂಡಿದ ಪರಮವಿರಕ್ತನ ಭೇದ.
--------------
ಮೋಳಿಗೆ ಮಾರಯ್ಯ
ಅವರಾರ ಪರಿಯಲ್ಲ ಎಮ್ಮ ನಲ್ಲನು. ವಿಶ್ವವೆಲ್ಲವು ಸತಿಯರು, ಸೋಜಿಗದ ಪುರುಷನು. ಅವರವರ ಪರಿಯಲ್ಲೆ ಅವರವರ ನೆರೆವನು, ಅವರವರಿಗವರಂತೆ ಸುಖಮಯನು ನೋಡಾ. ಅವರೆಲ್ಲರ ವಂಚಿಸಿ ಎನ್ನನಗಲದ ಪರಿಯ ನೋಡಾ, ಕೆಳದಿ. ನೀನೊಳ್ಳಿದಳಾದಡೆ ಮಹಾಮಂತ್ರವ ಜಪಿಸು, ನಿನ್ನನಗಲನು, ನಿನ್ನಾಣೆ, ಉರಿಲಿಂಗದೇವ, ತನ್ನಾಣೆ ಕೆಳದಿ.
--------------
ಉರಿಲಿಂಗದೇವ
ಅವರವರ ಸದಾಚರಣೆ ಅವರವರಿಗೆ ; ಅವರವರ ದುರಾಚರಣೆ ಅವರವರಿಗೆ. ಅವರವರ ಸದಾಚರಣೆ ನಮಗೇನು ಮೋಕ್ಷವ ಕೊಟ್ಟಿತ್ತೊ ? ಅವರವರ ದುರಾಚರಣೆ ನಮಗೇನು ಭವದಲ್ಲಿ ತಳ್ಳಿಬಿಟ್ಟಿತ್ತೊ ? ನಮ್ಮ ಲಕ್ಷ್ಯ ಲಾಂಛನದಲ್ಲಿ
--------------
ಸಿದ್ಧರಾಮೇಶ್ವರ
ಕಾಯ ಹಲವು ಭೇದಗಳಾಗಿ ಆತ್ಮನೇಕವೆಂಬುದು ಅದೇತರ ಮಾತು? ಬೆಂಕಿಯಿಂದಾದ ಬೆಳಗು ಸುಡಬಲ್ಲುದೆ? ಬೆಂಕಿಯಿಲ್ಲದೆ. ಹಲವು ಘಟದಲ್ಲಿ ಅವರವರ ಹೊಲಬಿನಲ್ಲಿ ಅನುಭವಿಸುತ್ತ ಮತ್ತೊಂದರಲ್ಲಿ ಕೂಟಸ್ಥವಪ್ಪ ಸುಖ ಉಂಟೆ? ಈ ಗುಣ ಎನ್ನಯ್ಯ ಚೆನ್ನರಾಮನನರಿದಲ್ಲಿ.
--------------
ಏಕಾಂತರಾಮಿತಂದೆ
ಆತ್ಮ ಘಟಮಧ್ಯದಲ್ಲಿ ನಿಂದು, ಕೈಯ್ಯಲ್ಲಿ ಮುಟ್ಟಿ, ಕಿವಿಯಲ್ಲಿ ಕೇಳಿ, ನಾಸಿಕದಲ್ಲಿ ವಾಸಿಸಿ, ಕಣ್ಣಿನಲ್ಲಿ ನೋಡಿ, ಬಾಯಲ್ಲಿ ಉಂಬಂತೆ, ಪಂಚೇಂದ್ರಿಯಕ್ಕೆ ತತ್ತಾಗಿ ಹಂಚಿಕೊಂಡಿಹುದು ಒಂದೆ ಆತ್ಮ. ಅವರವರ ಮುಖಂಗಳಿಂದ ಗುಣವನರಿವನ್ನಕ್ಕ, ಇಷ್ಟದ ಮರೆಯಲ್ಲಿ ಚಿತ್ತ ನಿಂದು, ವಸ್ತುನಾಮವಾಗಬೇಕು. ಸದಾಶಿವಮೂರ್ತಿಲಿಂಗವನರಿವುದಕ್ಕೆ.
--------------
ಅರಿವಿನ ಮಾರಿತಂದೆ
ಇನ್ನಷ್ಟು ... -->