ಅಯ್ಯಾ, ಮತ್ತೊಂದು ವೇಳೆ
ಅಷ್ಟತನುವಿನ ಮೂಲಹಂಕಾರವನೆತ್ತಿ ಚರಿಸಿತಯ್ಯ.
ಅದೆಂತೆಂದಡೆ : ಆ ಮೂಲಹಂಕಾರವೆ ಷೋಡಶಮದವಾಗಿ
ಬ್ರಹ್ಮನ ಶಿರವ ಕಳೆಯಿತಯ್ಯ,
ವಿಷ್ಣುವನು ಹಂದಿಯಾಗಿ ಹುಟ್ಟಿಸಿತಯ್ಯ.
ಇಂದ್ರನ ಶರೀರವ ಭವದ ಬೀಡು ಯೋನಿದ್ವಾರವ ಮಾಡಿತಯ್ಯ.
ಸೂರ್ಯ ಚಂದ್ರರ ಭವರಾಟಾಳದಲ್ಲಿ ತಿರಿಗಿಸಿತಯ್ಯ.
ಆ ಮದಂಗಳಾವುವೆಂದಡೆ :
ಕುಲಮದ, ಛಲಮದ, ಧನಮದ, ಯೌವನಮದ,
ರೂಪುಮದ, ವಿದ್ಯಾಮದ, ರಾಜ್ಯಮದ, ತಪಮದ,
ಸಂಸ್ಥಿತ, ತೃಣೀಕೃತ, ವರ್ತಿನಿ, ಕ್ರೋಧಿನಿ, ಮೋಹಿನಿ,
ಅತಿಚಾರಿಣಿ, ಗಂಧಚಾರಿಣಿ, ವಾಸಿನಿ ಎಂಬ
ಷೋಡಶಮದದ ಸಂದಿನಲ್ಲಿ ಎನ್ನ ಕೆಡಹಿ,
ಬಹುದುಃಖದಲ್ಲಿ ಅಳಲಿಸಿತಯ್ಯ.
ಗುರುವೆ, ಇಂಥ ದುರ್ಜೀವ ಮನದ ಸಂಗವ ತೊಲಗಿಸಿ ಕಾಯಯ್ಯ
ಕರುಣಾಳುವೆ, ಸಚ್ಚಿದಾನಂದಮೂರ್ತಿ ಭವರೋಗವೈದ್ಯನೆ
ಶ್ರೀಗುರುಲಿಂಗಜಂಗಮವೆ, ಹರಹರ ಶಿವಶಿವ ಜಯಜಯ ಕರುಣಾಕರ
ಮತ್ಪ್ರಾಣನಾಥ ಮಹಾಶ್ರೀಗುರುಸಿದ್ಧಲಿಂಗೇಶ್ವರ.