ಅಥವಾ

ಒಟ್ಟು 13 ಕಡೆಗಳಲ್ಲಿ , 11 ವಚನಕಾರರು , 11 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಶಿವಶಿವಾ ದ್ವಿಜರೆಂಬ ಪಾತಕರು ನೀವು ಕೇಳಿ ಭೋ ! ನೀವು ಎಲ್ಲಾ ಜಾತಿಗೂ ನಾವೇ ಮಿಗಿಲೆಂದು, `ವರ್ಣಾನಾಂ ಬ್ರಾಹ್ಮಣೋ ಗುರುಃ' ಎಂದು, ಬಳ್ಳಿಟ್ಟು ಬಾಸ್ಕಳಗೆಡವುತಿಪ್ಪಿರಿ ನೋಡಾ. `ಆದಿ ಬಿಂದುದ್ಭವೇ ಬೀಜಂ' ಎಂಬ ಶ್ರುತಿಯಿಂ ತಿಳಿದು ನೋಡಲು ಆದಿಯಲ್ಲಿ ನಿಮ್ಮ ಮಾತಾಪಿತರ ಕೀವು ರಕ್ತದ ಮಿಶ್ರದಿಂದ ನಿಮ್ಮ ಪಿಂಡ ಉದಯಿಸಿತ್ತು. ಆ ಕೀವು ರಕ್ತಕ್ಕೆ ಆವ ಕುಲ ಹೇಳಿರೆ ? ಅದೂ ಅಲ್ಲದೆ ಪಿಂಡ ಒಂಬತ್ತು ತಿಂಗಳು ಒಡಲೊಳಗೆ ಕುರುಳು, ಮಲಮೂತ್ರ, ಕೀವು, ದುರ್ಗಂಧ, ರಕ್ತ ಖಂಡಕಾಳಿಜ ಜಂತುಗಳೊಳಗೆ, ಪಾತಾಳದೊಳಗಣ ಕ್ರಿಮಿಯಂತೆ ಹೊದಕುಳಿಗೊಂಬಂದು ನೀನಾವ ಕುಲ ಹೇಳಿರೆ ? ಅದುವಲ್ಲದೆ ಮೂತ್ರದ ಕುಳಿಯ ಹೊರವಡುವಾಗ, ಹೊಲೆ ಮುಂತಾಗಿ ಮುದುಡಿ ಬಿದಲ್ಲಿ, ಹೆತ್ತವಳು ಹೊಲತಿ, ಹುಟ್ಟಿದ ಮಗುವು ಹೊಲೆಯನೆಂದು ನಿಮ್ಮ ಕುಲಗೋತ್ರ ಮುಟ್ಟಲಮ್ಮದೆ, ಹನ್ನೆರಡು ದಿನದೊಂದು ಪ್ರಾಯಶ್ಚಿತ್ತವನಿಕ್ಕಿಸಿಕೊಂಡು ಬಂದು ನಿನ್ನಾವ ಕುಲ ಹೇಳಿರೆ ? ಮುಂಜಿಗಟ್ಟದ ಮುನ್ನ ಕೀಳುಜಾತಿ, ಮುಂಜಿಗಟ್ಟಿದ ಬಳಿಕ ಮೇಲುಜಾತಿಗಳು ಎಂಬ ಪಾತಕರು ನಿಮ್ಮ ನುಡಿ ಕೊರತೆಗೆ ನೀವು ನಾಚಬೇಡವೆ ? ನೀವು ನಾಚದಿರ್ದಡೆ ನಾ ನಿಮ್ಮ ಕುಲದ ಬೇರನೆತ್ತಿ , ತಲೆಕೆಳಗು ಮಾಡಿ ತೋರಿಹೆನು. ನಾನು ಉತ್ತಮದ ಬ್ರಾಹ್ಮಣರೆಂಬ ನಿಮ್ಮ ದೇಹ ಬ್ರಹ್ಮನೊ ? ನಿಮ್ಮ ಪ್ರಾಣ ಬ್ರಹ್ಮನೊ ? ಆವುದು ಬ್ರಾಹ್ಮಣ್ಯ ? ಬಲ್ಲಡೆ ಬಗುಳಿರಿ ! ಅರಿಯದಿರ್ದಡೆ ಕೇಳಿರಿ. ದೇಹ ಕುಲಜನೆಂದಡೆ ಚರ್ಮಕ್ಕೆ ಕುಲವಿಲ್ಲ, ಖಂಡಕ್ಕೆ ಕುಲವಿಲ್ಲ, ನರವಿಂಗೆ ಕುಲವಿಲ್ಲ, ರಕ್ತಕ್ಕೆ ಕುಲವಿಲ್ಲ, ಕೀವಿಂಗೆ ಕುಲವಿಲ್ಲ. ಕರುಳಿಂಗೆ ಕುಲವಿಲ್ಲ, ಮಲಮೂತ್ರಕ್ಕಂತೂ ಕುಲವಿಲ್ಲ, ಒಡಲೆಂಬುದು ಅಪವಿತ್ರವಾಯಿತ್ತು, ಕುಲವೆಲ್ಲಿಯದೊಡಲಿಂಗೆ ? ಅವಂತಿರಲಿ ; ಇನ್ನು ನಿಮ್ಮ ಪ್ರಾಣಕ್ಕೆ ಕುಲವುಂಟೆಂದಡೆ. ಪ್ರಾಣ ದಶವಾಯುವಾದ ಕಾರಣ, ಆ ವಾಯು ಹಾರುವನಲ್ಲ. ಅದುವಲ್ಲದೆ ನಿಮ್ಮ ಒಡಲನಲಗಾಗಿ ಇರಿವ ಕಾಮ ಕ್ರೋಧ ಲೋಭ ಮೋಹ ಮದ ಮತ್ಸರಂಗಳು ಉತ್ತಮ ಕುಲವೆಂಬ ಅವು ಮುನ್ನವೆ ಪಾಪಕಾರಿಗಳಾದ ಕಾರಣ, ಅವಕ್ಕೆ ಕುಲವಿಲ್ಲ. ನಿಲ್ಲು ! ಮಾಣು ! ನಿಮ್ಮೊಳಗಣ ಸಪ್ತವ್ಯಸನಂಗಳು ಉತ್ತಮ ಕುಲವೆಂಬ ಅವು ಮುನ್ನವೆ ದುರ್ವ್ಯಸನಂಗಳಾದ ಕಾರಣ, ಅದಕೆಂದೂ ಕುಲವಿಲ್ಲ. ನಿಲ್ಲು ! ಮಾಣು ! ನಿಮ್ಮ ಅಷ್ಟಮದಂಗಳು ಉತ್ತಮ ಕುಲವೆಂಬ ಅವು ನಿನ್ನ ಸುರೆಯ ಸವಿದ ಕೋಡಗದ ಹಾಂಗೆ ನಿಮ್ಮ ಗಾಣಲೀಯವಾದ ಕಾರಣ, ಅವು ಕುಲವಿಲ್ಲ. ನಿಲ್ಲು ! ಬಗುಳದಿರು ! ಇನ್ನು ಒಡಲ ತಾಪತ್ರಯಂಗಳು ಉತ್ತಮ ಕುಲವೆಂಬ ಅವು ನಿಮ್ಮ ಇರಿದಿರಿದು ಸುಡುವ ಒಡಗಿಚ್ಚುಗಳು. ಅವು ಕುಲವಿಲ್ಲ. ನಿಲ್ಲು ! ಮಾಣು ! ನಿಮ್ಮೊಡಲ ಮುಚ್ಚಿದ ಮಲಮೂತ್ರಂಗಳ ಕುಲವುಂಟೆ ? ಅವು ಅರಿಕೆಯಲಿ ಮಲಮೂತ್ರಂಗಳಾದ ಕಾರಣ, ಅವಕ್ಕೆ ಕುಲವಿಲ್ಲ ನಿಲ್ಲು ! ಮಾಣು ! ಇನ್ನು ಉಳಿದ ಅಂತಃಕರಣಂಗಳಿಗೆ ಉತ್ತಮ ಕುಲವೆಂಬಿರಿ. ಅವ ನೀವು ಕಾಣಿರಿ, ನಿಮ್ಮನವು ಕಾಣವು. ಅದು ಕಾರಣ ಬಯಲಭ್ರಮೆಗೆ ಉತ್ತಮ ಕುಲವುಂಟೆ ? ಇಲ್ಲ ! ಇಲ್ಲ !! ನಿಲ್ಲು ! ಮಾಣು ! ಇಂತು ನಿಮ್ಮ ಪಂಚಭೂತ ಸಪ್ತಧಾತು ಪಂಚೇಂದ್ರಿಯಂಗಳು ಉತ್ತಮ ಕುಲವೆಂಬ ಅವು ಎಲ್ಲಾ ಜೀವರಾಶಿಗೂ ನಿಮಗೂ ಒಂದೇ ಸಮಾನ. ಅದೆಂತೆಂದಡೆ : ಸಪ್ತಧಾತುಸಮಂ ಪಿಂಡಂ ಸಮಯೋನಿಸಮುದ್ಭವಂ | ಆತ್ಮಾಜೀವಸಮಾಯುಕ್ತಂ ವರ್ಣಾನಾಂ ಕಿಂ ಪ್ರಯೋಜನಂ || ಎಂದುದಾಗಿ, ನಿಮ್ಮ ದೇಹಕ್ಕೆ ಕುಲವಾವುದು ಹೇಳಿರೆ ! ಇದಲ್ಲದೆ ಆತ್ಮನು ದೇಹವ ಬಿಟ್ಟು, ಒಂದು ಘಳಿಗೆ ತೊಲಗಿರಲು ಆ ದೇಹ ಹಡಿಕೆಯಾಗಿ ಹುಳಿತು, ನಾಯಿ ನರಿ ತಿಂಬ ಕಾರಣ ನಿಮ್ಮ ದೇಹ ಅಪವಿತ್ರ ಕಾಣಿರೆ ! ಇಂತಪ್ಪ ಅಪವಿತ್ರ ಕಾರ್ಯಕ್ಕೆ ಕುಲವಿಲ್ಲ. ಆ ಕಾರ್ಯಕ್ಕೆ ಕುಲವುಂಟೆಂದಡೆ ಮೇಲುಜಾತಿಯ ದೇಹದೊಳಗೆ ಹಾಲುವುಳ್ಳಡೆ ಕೀಳುಜಾತಿಯ ದೇಹದೊಳಗೆ ರಕ್ತವುಳ್ಳಡೆ ಅದು ಕುಲವಹುದು ! ಅಂಥಾ ಗುಣ ನಿಮಗಿಲ್ಲವಾಗಿ, ಎಲ್ಲಾ ಜೀವರಾಶಿಯ ದೇಹವು, ನಿಮ್ಮ ದೇಹವು ಒಂದೇ ಸಮಾನವಾದ ಕಾರಣ ನಿಮಗೆ ಕುಲವಿಲ್ಲ ! ನಿಲ್ಲು ! ಮಾಣು ! ಒಡಲು ಕರಣಾದಿಗಳು ಕುಲವಿಲ್ಲದೆ ಹೋದಡೂ ಎಲ್ಲವೂ ಅರಿವ ಚೈತನ್ಯಾತ್ಮಕನೆ, ಸತ್ಕುಲಜನೆ ಆತ್ಮನು, ಆವ ಕುಲದೊಳಗೂ ಅಲ್ಲ. ಶರೀರ ಬೇರೆ, ಆತ್ಮ ಬೇರೆ. ಅದೆಂತೆಂದಡೆ : ಭೂದೇವಮೃದ್ಭಾಂಡಮನೇಕ ರೂಪಂ ಸುವರ್ಣಮೇಕಂ ಬಹುಭೂಷಣಾನಾಂ | ಗೋಕ್ಷೀರಮೇಕಂ ಬಹುವರ್ಣಧೇನುಃ | ಶರೀರಭೇದಸ್ತೆ ್ವೀಕಃ ಪರಮಾತ್ಮಾ || ಎಂದುದಾಗಿ, ಶರೀರಂಗಳು ಅನಂತ, ಆತ್ಮನೊಬ್ಬನೆ. ಅದು ಕಾರಣ, ಆ ಆತ್ಮನು ಆವ ಕುಲದಲ್ಲೂ ಅಲ್ಲ. ಇನ್ನು ಆವ ಠಾವಿನಲ್ಲಿ ನಿಮ್ಮ ಕುಲದ ಪ್ರತಿಷ್ಠೆಯ ಮಾಡಿ ತೋರಿವಿರೊ ? ದೇಹದ ಮೃತ್ತಿಕೆ ಆತ್ಮ ನಿರಾಕಾರನೆನುತ್ತಿರಲು, ಇನ್ನಾವ ಪರಿಯಲ್ಲಿ ನಾ ಉತ್ತಮ ಕುಲಜರೆಂಬಿರೊ ? ಜೀವಶ್ಶಿವೋ ಶಿವೋ ಜೀವಸ್ಸಜೀವಃ ಕೇವಲಃ ಶಿವಃ | ಪಾಶಬದ್ಧಸ್ಥಿತೋ ಜೀವಃ ಪಾಶಮುಕ್ತಃ ಸದಾಶಿವಃ || ಎಂಬ ಶ್ರುತಿಯಂ ತಿಳಿದು ನೋಡಲು, ನೀವೆಲ್ಲಾ ಪಾಶಬದ್ಧ ಜೀವಿಗಳಾಗುತ್ತ ಇರಲು, ನಿಮಗೆಲ್ಲಿಯ ಉತ್ತಮ ಕುಲ ? ಪಾಶಮುಕ್ತರಾದ ಎಮ್ಮ ಶಿವಭಕ್ತರೆ ಕುಲಜರಲ್ಲದೆ ನಿಮಗೆ ಉತ್ತಮ ಕುಲ ಉಂಟಾದಡೆ, ನಿಮ್ಮ ದೇಹದೊಳಗೆ ಹೊರಗೆ ಇಂಥಾ ಠಾವೆಂದು ಬೆರಳುಮಾಡಿ ತೋರಿ ! ಅದೂ ಅಲ್ಲದೆ ಒಂದು ಪಕ್ಷಿಯ ತತ್ತಿಯೊಳಗೆ ಹಲವು ಮರಿ ಹುಟ್ಟಿದಡೆ ಒಂದರ ಮರಿಯೋ, ಹಲವು ಪಕ್ಷಿಯ ಮರಿಯೋ ? ತಿಳಿದು ನೋಡಿದಡೆ ಅದಕ್ಕೆ ಬೇರೆ ಬೇರೆ ಪಕ್ಷಿಗಳೆಂಬ ಕುಲವಿಲ್ಲ. ಅಹಂಗೆ ಒಬ್ಬ ಬ್ರಹ್ಮನ ಅಂಡವೆಂಬ ತತ್ತಿಯೊಳಗೆ ಸಕಲ ಜೀವರಾಶಿ ಎಲ್ಲಾ ಉದಯಿಸಿದವು. ಅದೆಂತೆಂದಡೆ : ಪೃಥಿವ್ಯಾಕಾಶಯೋರ್ಭಾಂಡಂ ತಸ್ಯಾಂಡಂ ಜಾಯತೇ ಕುಲಂ | ಅಂತ್ಯಜಾತಿದ್ರ್ವಿಜಾತಿರ್ಯಾ ಏಕಯೋನಿಸಹೋದರಾ || ಎಂದುದಾಗಿ, ಇರುಹೆ ಮೊದಲು, ಆನೆ ಕಡೆಯಾದ ಸಚರಾಚರವೆಲ್ಲವು ಒಬ್ಬ ಬ್ರಹ್ಮನ ಅಂಡದೊಳಗೆ ಹುಟ್ಟಿ, ಏಕಯೋನಿ ಸಹೋದರರೆಂದು ಪ್ರತಿಷ್ಠಿಸುತ್ತಿರಲು, ನಿಮಗೆಲ್ಲಿಯ ಕುಲವೊ ? ಶಿವಭಕ್ತರೆ ಉತ್ತಮ ಕುಲಜರೆಂದು, ಮಿಕ್ಕಿನವರೆಲ್ಲಾ ಕೀಳುಜಾತಿ ಎಂಬುದನು ಓದಿ ಬರಿದೊರೆಯಾದಡು ನಾನು ನಿಮಗೆ ಹೇಳಿಹೆನು ಕೇಳಿ ಶ್ವಪಚೋಪಿ ಮುನಿಶ್ರೇಷ್ಠಶ್ಶಿವ ಸಂಸ್ಕಾರಸಂಯುತಃ | ಶಿವಸಂಸ್ಕಾರಹೀನಶ್ಚ ಬ್ರಾಹ್ಮಣಃ ಶ್ವಪಚಾಧಮಃ || ಎಂಬ ಶ್ರುತಿಗೆ ಇದಿರುತ್ತರವ ಕೊಟ್ಟಡೆ, ಬಾಯಲ್ಲಿ ಕಾಷ್ಟವ ಮೂಡುವುದಾಗಿ ನೀವೇ ಕೀಳುಜಾತಿಗಳು, ಅರಿದ ಶಿವಭಕ್ತರು ಸತ್ಕುಲಜರೆಂದು ಸುಮ್ಮನಿರಿರೋ. ಅಲ್ಲದ ಅಜ್ಞಾನರಾದುದೆಲ್ಲಾ ಒಂದು ಕುಲ. ಸುಜ್ಞಾನರಾದುದೆಲ್ಲಾ ಒಂದು ಕುಲವೆಂದು ಶಾಸ್ತ್ರಗಳು ಹೇಳುತ್ತಿದಾವೆ. ಅದೆಂತೆಂದಡೆ : ಆಹಾರನಿದ್ರಾಭಯಮೈಥುನಂ ಚ ಸಾಮಾನ್ಯಮೇತತ್ಪಶುಬ್ಥಿರ್ನರಾಣಾಂ | ಜ್ಞಾನಂ ಹಿ ತೇಷಾಂ ಅದ್ಥಿಕೋ ವಿಶೇಷಃ ಜ್ಞಾನೇನ ಹೀನಾಃ ಪಶುಬ್ಥಿಃ ಸಮಾನಾಃ || ಎಂದುದಾಗಿ, ಅಜ್ಞಾನತಂತುಗಳು ನೀವೆಲ್ಲರೂ ಕರ್ಮಪಾಶಬದ್ಧರು. ನಿಮಗೆಲ್ಲಿಯದೊ ಸತ್ಕುಲ ? ಇದು ಅಲ್ಲದೆ ನಿಮ್ಮ ನುಡಿಯೊಡನೆ ನಿಮಗೆ ಹಗೆಮಾಡಿ ತೋರಿಹೆನು. ಕೇಳೆಲವೊ ನಿಮಗೆ ಕುಲವು ವಶಿಷ್ಟ, ವಿಶ್ವಾಮಿತ್ರ, ಭಾರದ್ವಾಜ, ಕೌಂಡಿಲ್ಯ, ಕಾಶ್ಯಪನೆಂಬ ಋಷಿಗಳಿಂದ ಬಂದಿತ್ತೆಂಬಿರಿ. ಅವರ ಪೂರ್ವವನೆತ್ತಿ ನುಡಿದಡೆ ಹುರುಳಿಲ್ಲ. ಅವರೆಲ್ಲಾ ಕೀಳುಜಾತಿಗಳಾದ ಕಾರಣ, ನೀವೇ ಋಷಿಮೂಲವನು, ನದಿಮೂಲವನೆತ್ತಲಾಗದೆಂಬಿರಿ. ಇನ್ನು ನಿಮ್ಮ ನುಡಿ ನಿಮಗೆ ಹಗೆಯಾಯಿತ್ತೆಂದೆ ಕೇಳಿರೊ. ಆ ಋಷಿಗಳ ಸಂತಾನವಾಗಿ ನಿಮ್ಮ ಮೂಲವನೆತ್ತಿದಡೂ ಹುರುಳಿಲ್ಲ. ಅದಂತಿರಲಿ. ನಿಮ್ಮ ಕುಲಕೆ ಗುರುವೆನಿಸುವ ಋಷಿಗಳೆಲ್ಲರೂ ಲಿಂಗವಲ್ಲದೆ ಪೂಜಿಸರು, ವಿಭೂತಿ ರುದ್ರಾಕ್ಷಿಯನಲ್ಲದೆ ಧರಿಸರು, ಪಂಚಾಕ್ಷರಿಯನಲ್ಲದೆ ಜಪಿಸರು, ಜಡೆಯನ್ನಲ್ಲದೆ ಕಟ್ಟರು. ಹಾಗೆ ನೀವು ಲಿಂಗವ ಪೂಜಿಸಿ, ವಿಭೂತಿ ರುದ್ರಾಕ್ಷಿಯ ಧರಿಸಿ, ಪಂಚಾಕ್ಷರಿಯ ಜಪಿಸಿ, ಜಡೆಯ ಕಟ್ಟಿ, ಈಶ್ವರನ ಲಾಂಛನವ ಧರಿಸಿದಡೆ ನೀವು ಋಷಿಮೂಲದವರಹುದು. ಹೇಗಾದಡೂ ಅನುಸರಿಸಿಕೊಳಬಹುದು. ಅದು ನಿಮಗಲ್ಲದ ಮಟ್ಟಿಯನ್ನಿಟ್ಟು ವಿಷ್ಣುವಂ ಪೂಜಿಸಿ ಮುಡುಹಂ ಸುಡಿಸಿಕೊಂಡು, ಸಾಲಿಗ್ರಾಮ, ಶಕ್ತಿ, ಲಕ್ಷ್ಮಿ, ದುರ್ಗಿ ಎಂಬ ಕಿರುಕುಳದೈವವಂ ಪೂಜಿಸಿ, ನರಕಕ್ಕಿಳಿದು ಹೋಹರಾದ ಕಾರಣ, ನೀವೇ ಹೀನಜಾತಿಗಳು. ನಿಮ್ಮ ಋಷಿಮಾರ್ಗವ ವಿಚಾರಿಸಿ ನಡೆಯಿರಾಗಿ ನೀವೇ ಲಿಂಗದ್ರೋಹಿಗಳು. ಲಿಂಗವೆ ದೈವವೆಂದು ಏಕನಿಷ್ಠೆಯಿಂದಲಿರಿರಾಗಿ ನೀವೇ ಲಿಂಗದ್ರೋಹಿಗಳು. ಪಂಚಾಕ್ಷರಿಯ ನೆನೆಯಿರಾಗಿ ಮಂತ್ರದ್ರೋಹಿಗಳು. ರುದ್ರಾಕ್ಷಿಯ ಧರಿಸರಾದ ಕಾರಣ ನೀವು ಶಿವಲಾಂಛನ ದ್ರೋಹಿಗಳು. ಶಿವಭಕ್ತರಿಗೆರಗದ ಕಾರಣ ನೀವು ಶಿವಭಕ್ತರಿಗೆ ದ್ರೋಹಿಗಳು. ನಿಮ್ಮ ಮುಖವ ನೋಡಲಾಗದು. ಬರಿದೆ ಬ್ರಹ್ಮವನಾಚರಿಸಿ ನಾವು ಬ್ರಹ್ಮರೆಂದೆಂಬಿರಿ. ಬ್ರಹ್ಮವೆಂತಿಪ್ಪುದೆಂದರಿಯಿರಿ. ಬ್ರಹ್ಮಕ್ಕೂ ನಿಮಗೂ ಸಂಬಂಧವೇನೊ ? ಸತ್ಯಂ ಬ್ರಹ್ಮ ಶುಚಿಬ್ರ್ರಹ್ಮ ಇಂದ್ರಿಯನಿಗ್ರಹಃ | ಸರ್ವಜೀವದಯಾಬ್ರಹ್ಮ ಇತೈ ್ಯೀದ್ಬ್ರಹ್ಮ ಲಕ್ಷಣಂ | ಸತ್ಯಂ ನಾಸ್ತಿ ಶುಚಿರ್ನಾಸ್ತಿ ನಾಸ್ತಿ ಚೇಂದ್ರಿಯ ನಿಗ್ರಹಃ | ಸರ್ವಜೀವ ದಯಾ ನಾಸ್ತಿ ಏತಚ್ಚಾಂಡಾಲ ಲಕ್ಷಣಂ || ಬ್ರಹ್ಮಕ್ಕೂ ನಿಮಗೂ ಸಂಬಂಧವೇನೊ ? ಬ್ರಹ್ಮವೆ ನಿಃಕರ್ಮ, ನೀವೇ ಕರ್ಮಿಗಳು. ಮತ್ತೆಂತೊ `ಬ್ರಹ್ಮಂ ಚರೇತಿ ಬ್ರಹ್ಮಣಾಂ' ಎಂದು ಗಳವುತ್ತಿಹಿರಿ. ಗಾಯತ್ರಿಯ ಜಪಿಸಿ ನಾವು ಕುಲಜರೆಂಬಿರಿ. ಆ ಗಾಯತ್ರಿ ಕರ್ಮವಲ್ಲದೆ ಮುಕ್ತಿಗೆ ಕಾರಣವಿಲ್ಲ. ಅಂತು ಗಾಯತ್ರಿಯಿಂದ ನೀವು ಕುಲಜರಲ್ಲ. ವೇದವನೋದಿ ನಾವೇ ಬ್ರಹ್ಮರಾದೆವೆಂಬಿರಿ. ವೇದ ಹೇಳಿದ ಹಾಂಗೇ ನಡೆಯಿರಿ. ಅದೆಂತೆಂದಡೆ : ``ದ್ಯಾವಾಭೂವಿೂ ಜನಯನ್ ದೇವ ಏಕಃ'' ಎಂದೋದಿ ಮರದು, ವಿಷ್ಣು ವನೆ ಭಜಿಸುವಿರಿ. ನೀವೇ ವೇದವಿರುದ್ಧಿಗಳು. ``ವಿಶ್ವತೋ ಮುಖ ವಿಶ್ವತೋ ಚಕ್ಷು ವಿಶ್ವತೋ ಬಾಹು'' ಎಂದೋದಿ ಮತ್ತೆ , ``ಏಕೋ ರುದ್ರೋ ನ ದ್ವಿತೀಯಾಯ ತಸ್ಥೇ'' ಎಂದು ಮರದು, ಬೇರೊಬ್ಬ ದೈವ ಉಂಟೆಂದು ಗಳಹುತ್ತಿದಿರಿ. ನೀವೇ ವೇದದ್ರೋಹಿಗಳು. ``ಏಕಮೇವಾದ್ವಿತಿಯಂ ಬ್ರಹ್ಮ''ವೆಂದೋದಿ, ಕರ್ಮದಲ್ಲಿ ಸಿಕ್ಕಿದೀರಿ. ನೀವೇ ದುಃಕರ್ಮಿಗಳು. ``ಅಯಂ ಮೇ ಹಸ್ತೋ ಭಗವಾನ್, ಅಯಂ ಮೇ ಭಗವತ್ತರಃ |'' ಎಂದೋದಿ, ಅನ್ಯಪೂಜೆಯ ಮಾಡುತಿದೀರಿ. ನೀವೇ ಪತಿತರು. ``ಶಿವೋ ಮೇ ಪಿತಾ'' ಎಂದೋದಿ, ಸನ್ಯಾಸಿಗಳಿಗೆ ಮಕ್ಕಳೆಂದಿರಿ. ನೀವೇ ಶಾಸ್ತ್ರವಿರುದ್ಧಿಗಳು. ಸದ್ಯೋಜಾತದ್ಭವೇದ್ಭೂಮಿರ್ವಾಮದೇವಾದ್ಭವೇಜ್ಜಲಂ | ಅಘೋರಾದ್ವನ್ಹಿರಿತ್ಯುಕ್ತಸ್ತತ್ಪುರುಷಾದ್ವಾಯುರುಚ್ಯತೇ || ಈಶಾನ್ಯಾದ್ಗಗನಾಕಾರಂ ಪಂಚಬ್ರಹ್ಮಮಯಂ ಜಗತ್ | ಎಂದೋದಿ, ಸರ್ವವಿಷ್ಣುಮಯ ಎನ್ನುತ್ತಿಪ್ಪಿರಿ. ನಿಮ್ಮಿಂದ ಬಿಟ್ಟು ಶಿವದ್ರೋಹಿಗಳಾರೊ ? ``ಭಸ್ಮ ಜಲಮಿತಿ ಭಸ್ಮ ಸ್ಥಲಮಿತಿ ಭಸ್ಮ |'' ಎಂದೋದಿ, ಮರದು ವಿಭೂತಿಯ ನೀಡಲೊಲ್ಲದೆ ಮಟ್ಟಿಯಂ ನೀಡುವಿರಿ. ನಿಮ್ಮಿಂದ ಪತಿತರಿನ್ನಾರೊ ? ``ರುದ್ರಾಕ್ಷಧಾರಣಾತ್ ರುದ್ರಃ'' ಎಂಬುದನೋದಿ ರುದ್ರಾಕ್ಷಿಯಂ ಧರಿಸಲೊಲ್ಲದೆ, ಪದ್ಮಾಕ್ಷಿ ತೊಳಸಿಯ ಮಣಿಯಂ ಕಟ್ಟಿಕೊಂಬಿರಿ. ನಿಮ್ಮಿಂದ ಪಾಪಿಗಳಿನ್ನಾರೊ ? ``ಪಂಚಾಕ್ಷರಸಮಂ ಮಂತ್ರಂ ನಾಸ್ತೀ ತತ್ವಂ ಮಹಾಮುನೇ '' ಎಂಬುದನೋದಿ, ಪಂಚಾಕ್ಷರಿಯ ಜಪಿಸಲೊಲ್ಲದೆ, ಗೋಪಳಾ ಮಂತ್ರವ ನೆನವಿರಿ ಎಂತೊ ? ನಿಮ್ಮ ನುಡಿ ನಿಮಗೆ ವಿರುದ್ಧವಾಗಿರಲು, ನಿಮ್ಮ ಓದು ವೇದ ನಿಮಗೆ ವಿರುದ್ಧವಾಗಿರಲು, ನಿಮ್ಮ ಉತ್ತಮ ಕುಲಜರೆಂದು ವಂದಿಸಿದವರಿಗೆ ಶೂಕರ ಜನ್ಮದಲ್ಲಿ ಬಪ್ಪುದು ತಪ್ಪದು ನೋಡಿರೆ ! ವಿಪ್ರಾಣಾಂ ದರಿಶನೇ ಕಾಲೇ ಪಾಪಂ ಭುಂಜಂತಿ ಪೂಜಕಾಃ | ವಿಪ್ರಾಣಾಂ ವದನೇನೈವ ಕೋಟಿಜನ್ಮನಿ ಶೂಕರಃ || ಇಂತೆಂದುದಾಗಿ, ನಿಮ್ಮೊಡನೆ ಮಾತನಾಡಿದಡೆ ಪಂಚಮಹಾಪಾತಕಃ ನಿಮ್ಮ ಮುಖವ ನೋಡಿದಡೆ ಅಘೋರನರಕ. ಅದೆಂತೆಂದಡೆ : ಒಬ್ಬ ಹಾರುವನ ದಾರಿಯಲ್ಲಿ ಕಂಡದಿರೆ ಇರಿದು ಕೆಡಹಿದಲ್ಲದೆ ಹೋಗಬಾರದೆಂದು ನಿಮ್ಮ ವಾಕ್ಯವೆಂಬ ನೇಣಿಂದ ಹೆಡಗುಡಿಯ ಕಟ್ಟಿಸಿಕೊಳುತಿಪ್ಪಿರಿ. ಮತ್ತು ನಿಮ್ಮ ದುಶ್ಯರೀರತ್ರಯವನೆಣಿಸುವಡೆ ``ಅಣೋರಣೀಯಾನ್ ಮಹತೋ ಮಹೀಯಾನ್'' ಎಂಬುದ ನೀವೇ ಓದಿ, ಪ್ರಾಣಿಯಂ ಕೊಂದು ಯಾಗವನ್ನಿಕ್ಕಿ, ದೇವರ್ಕಳುಗಳಿಗೆ ಹೋಮದ ಹೊಗೆಯಂ ತೋರಿ, ಕೊಬ್ಬು ಬೆಳೆದ ಸವಿಯುಳ್ಳ ಖಂಡವನೆ ತಿಂದು, ಸೋಮಪಾನವೆಂಬ ಸುರೆಯನೆ ಕುಡಿದು, ನೊಸಲಕಣ್ಣ ತೋರುವಂತಹ ಶಿವಭಕ್ತನಾದಡೂ ನಿಂದಿಸಿ ನುಡಿವುತಿಪ್ಪಿರಿ. ನಿಮ್ಮೊಡನೆ ನುಡಿವಡೆ ಗುರುಲಿಂಗವಿಲ್ಲದವರು ನುಡಿವರಲ್ಲದೆ, ಗುರುಲಿಂಗವುಳ್ಳವರು ನುಡಿವರೆ ? ಇದು ಶ್ರುತ ದೃಷ್ಟ ಅನುಮಾನದಿಂದ ವಿಚಾರಿಸಿ ನೋಡಲು, ನೀವೇ ಪಂಚಮಹಾಪಾತಕರು. ಶಿವಭಕ್ತಿಯರಿಯದ ನರರು ಪೀನಕುರಿಗಳು. ನಿಮ್ಮಿಂದ ಏಳುಬೆಲೆ ಹೊರಗಾದ ಹೊಲೆಯನೆ ಉತ್ತಮ ಕುಲಜನೆಂದು ಮುಂಡಿಗೆಯ ಹಾಕಿದೆನು, ಎತ್ತಿರೊ ಸತ್ಯವುಳ್ಳಡೆ ! ಅಲ್ಲದಡೆ ನಿಮ್ಮ ಬಾಯಬಾಲವ ಮುಚ್ಚಿಕೊಳ್ಳಿರೆ. ಎಮ್ಮ ಶಿವಭಕ್ತರೇ ಅದ್ಥಿಕರು, ಎಮ್ಮ ಶಿವಭಕ್ತರೇ ಕುಲಜರು, ಎಮ್ಮ ಶಿವಭಕ್ತರೇ ಸದಾಚಾರಿಗಳು, ಎಮ್ಮ ಶಿವಭಕ್ತರೇ ಪಾಪರಹಿತರು, ಎಮ್ಮ ಶಿವಭಕ್ತರೇ ಸರ್ವಜೀವ ದಯಾಪಾರಿಗಳು, ಎಮ್ಮ ಶಿವಭಕ್ತರೇ ಸದ್ಯೋನ್ಮುಕ್ತರಯ್ಯಾ, ಘನಗುರು ಶಿವಲಿಂಗ ರಾಮನಾಥ.
--------------
ವೀರಶಂಕರದಾಸಯ್ಯ
ಆದಿ ಅನಾದಿ ನಿತ್ಯಾನಿತ್ಯವ ತಿಳಿಯಲರಿಯದೆ ವಾಯಕ್ಕೆ ಪರಬ್ರಹ್ಮವ ನುಡಿವ ವಾಯುಪ್ರಾಣಿಗಳವರೆತ್ತ ಬಲ್ಲರೋ, ಆ ಪರಬ್ರಹ್ಮದ ನಿಜದ ನಿಲವ ? ಅದೆಂತೆಂದಡೆ ; ಆದಿಯೆ ದೇಹ, ಅನಾದಿಯೆ ನಿರ್ದೇಹ, ಆದಿಯೆ ಸಕಲ, ಅನಾದಿಯೆ ನಿಷ್ಕಲ, ಆದಿಯೆ ಜಡ, ಅನಾದಿಯೆ ಅಜಡ. ಆದಿಯೆ ಕಾಯ, ಅನಾದಿಯೆ ಪ್ರಾಣ. ಈ ಎರಡರ ಯೋಗವ ಭೇದಿಸಿ ತನ್ನಿಂದ ತಾನೆ ತಿಳಿದು ನೋಡಲು, ಆದಿ ಸಂಬಂಧವಪ್ಪ ಭೂತಂಗಳು ನಾನಲ್ಲ. ದಶವಿಧೇಂದ್ರಿಯಂಗಳು ನಾನಲ್ಲ, ದಶವಾಯುಗಳು ನಾನಲ್ಲ. ಅಷ್ಟಮದಂಗಳು, ಸಪ್ತವ್ಯಸನಂಗಳು, ಅರಿಷಡ್ವರ್ಗಂಗಳು, ಷಡೂರ್ಮಿಗಳು, ಷಡ್ಬ್ರಮೆಗಳು, ಷಡ್ಭಾವವಿಕಾರಂಗಳು, ಷಟ್ಕರ್ಮಂಗಳು, ಷಡ್ಧಾತುಗಳು, ತನುತ್ರಯಂಗಳು, ಜೀವತ್ರಯಂಗಳು, ಮಲತ್ರಯಂಗಳು, ಮನತ್ರಯಂಗಳು, ಗುಣತ್ರಯಂಗಳು, ಭಾವತ್ರಯಂಗಳು, ತಾಪತ್ರಯಂಗಳು, ಅಂತಃಕರಣಂಗಳು ಇಂತಿವಾದಿಯಾಗಿ ತೋರುವ ತೋರಿಕೆಯೇನೂ ನಾನಲ್ಲ, ನನ್ನವಲ್ಲ. ಇಂತಿವೆಲ್ಲವೂ ನನ್ನಾಧೀನವಾಗಿಪ್ಪವು ನಾನಿವರಾಧೀನದವನಲ್ಲ. ನಾನು ತೂರ್ಯ ತೂರ್ಯಾತೀತವಪ್ಪ ಸತ್ತು ಚಿತ್ತಾನಂದ ನಿತ್ಯಪರಿಪೂರ್ಣವಸ್ತುವೆ ತನ್ನಿರವೆಂದು ತಿಳಿಯೆ, ಆ ತಿಳಿದ ಮಾತ್ರದಲ್ಲಿಯೇ ಅನಿತ್ಯದ ಬೆಸುಗೆ ಬಿಟ್ಟು ನಿರಾಳದಲ್ಲಿ ನಿಜವನೈದಲರಿಯದೆ ಮತ್ತೆಯುಂ ಭೌತಿಕ ತತ್ವಸಂಬಂಧಿಯಾಗಿ ಇರುತ್ತಿರಲು, ಇಂತೀ ತತ್ವದಾದಿ ತಾನೆಂತೆನಲು ಆ ಪರಬ್ರಹ್ಮವಪ್ಪ ನಿತ್ಯನಿರಾಳ ನಿಃಶೂನ್ಯಲಿಂಗವೆ ತನ್ನ ಲೀಲಾವಿಲಾಸದಿಂದ ತಾನೆ ಸುನಾದ ಬಿಂದು ಪ್ರಕಾಶ ತೇಜೋಮೂರ್ತಿಯಾಗಿ ನಿಂದು ಮಹಾಲಿಂಗವೆಂದೆನಿಸಿತ್ತು. ಆ ಮಹಾಲಿಂಗವೆ ಪಂಚಸಾದಾಖ್ಯವೆಂದೆನಿಸಿತ್ತು. ಆ ಪಂಚಸಾದಾಖ್ಯವೆ ಪಂಚಲಿಂಗ ಪ್ರಕಾಶವೆಂದೆನಿಸಿತ್ತು. ಆ ಪಂಚಲಿಂಗ ಪ್ರಕಾಶವೆ ಪಂಚಮುಖವೆಂದೆನಿಸಿತ್ತು. ಆ ಪಂಚಮುಖದಿಂದವೆ ಪಂಚಾಕ್ಷರಿಯುತ್ಪತ್ತಿ. ಆ ಪಂಚಾಕ್ಷರಿಯಿಂದವೆ ಪಂಚಕಲೆಗಳುತ್ಪತ್ತಿ. ಆ ಪಂಚಕಲೆಗಳಿಂದವೆ ಜ್ಞಾನ ಮನ ಬುದ್ಧಿ ಚಿತ್ತ ಅಹಂಕಾರಗಳುತ್ಪತ್ತಿ. ಆ ಜ್ಞಾನ ಮನ ಬುದ್ಧಿ ಚಿತ್ತ ಅಹಂಕಾರಗಳಿಂದವೆ ಪಂಚತನ್ಮಾತ್ರಂಗಳುತ್ಪತ್ತಿ. ಆ ಪಂಚತನ್ಮಾತ್ರಂಗಳಿಂದವೆ ಪಂಚಭೂತಂಗಳುತ್ಪತ್ತಿ. ಆ ಪಂಚಭೂತಂಗಳೇ ಪಂಚೀಕರಣವನೆಯ್ದಿ ಆತ್ಮಂಗೆ ಅಂಗವಾಯಿತ್ತು. ಆ ಅಂಗಕ್ಕೆ ಜ್ಞಾನೇಂದ್ರಿಯಂಗಳು ಕರ್ಮೇಂದ್ರಿಯಂಗಳು ಪ್ರತ್ಯಂಗವೆಂದೆನಿಸಿತ್ತು. ಇಂತು ದೇಹ ಸಂಬಂಧಮಂ ಶಿವ ತನ್ನ ಚಿದಂಶಿಕನಪ್ಪ ಆತ್ಮಂಗೆ ಸಂಬಂಧಿಸಿದನಾಗಿ, ಆ ಸಂಬಂಧಿಸಿದ ಕಾಯದ ಪೂರ್ವಾಶ್ರಯವು ಎಲ್ಲಿಯಾಯಿತ್ತು ಅಲ್ಲಿಯೇ ಅಡಗಿಸಿ ಆ ಕಾಯದ ಪೂರ್ವಾಶ್ರಯವನಳಿದು ಮಹಾ ಘನಲಿಂಗವ ವೇಧಿಸಿ ಕೊಟ್ಟು, ಶಿವ ತಾನೆ ಗುರುವಾಗಿ ಬಂದು ಮಹಾಘನಲಿಂಗವ ವೇಧಿಸಿ ಕೊಟ್ಟ ಪರಿ ಎಂತೆಂದಡೆ ಆತ್ಮಗೂಡಿ ಪಂಚಭೂತಂಗಳನೆ ಷಡ್ವಿಧ ಅಂಗವೆಂದೆನಿಸಿ, ಆ ಅಂಗಕ್ಕೆ ಆ ಕಲೆಗಳನೆ ಷಡ್ವಿಧ ಶಕ್ತಿಗಳೆಂದೆನಿಸಿ, ಆ ಶಕ್ತಿಗಳಿಗೆ ಷಡ್ವಿಧ ಭಕ್ತಿಯನಳವಡಿಸಿ, ಆ ಭಕ್ತಿಗಳಿಗೆ ಭಾವ ಜ್ಞಾನ ಮನ ಬುದ್ಧಿ ಚಿತ್ತ ಅಹಂಕಾರಂಗಳನೆ ಷಡ್ವಿಧ ಹಸ್ತಂಗಳೆಂದೆನಿಸಿ, ಆ ಹಸ್ತಂಗಳಿಗೆ ಮಹಾಲಿಂಗವಾದಿಯಾದ ಪಂಚಲಿಂಗಗಳನೆ ಷಡ್ವಿಧ ಲಿಂಗಂಗಳೆಂದೆನಿಸಿ, ಆ ಮುಖಂಗಳಿಗೆ ತನ್ಮಾತ್ರಂಗಳನೆ ದ್ರವ್ಯಪದಾರ್ಥಂಗಳೆಂದೆನಿಸಿ, ಆ ದ್ರವ್ಯಪದಾರ್ಥಂಗಳು ಆಯಾಯ ಮುಖದ ಲಿಂಗಂಗಳಲ್ಲಿ ನಿರಂತರ ಸಾವಧಾನದಿಂದ ಅರ್ಪಿತವಾಗಿ ಬೀಗಲೊಡನೆ. ಅಂಗಸ್ಥಲಂಗಳಡಗಿ ತ್ರಿವಿಧ ಲಿಂಗಾಂಗಸ್ಥಲಂಗಳುಳಿದು ಕಾಯ ಗುರು, ಪ್ರಾಣ ಲಿಂಗ, ಜ್ಞಾನ ಜಂಗಮ ಗುರುವಿನಲ್ಲಿ ಶುದ್ಧಪ್ರಸಾದ, ಲಿಂಗದಲ್ಲಿ ಸಿದ್ಧಪ್ರಸಾದ, ಜಂಗಮದಲ್ಲಿ ಪ್ರಸಿದ್ಧಪ್ರಸಾದ. ಇಂತೀ ತ್ರಿವಿಧ ಪ್ರಸಾದವು ಏಕಾರ್ಥವಾಗಿ, ಮಹಾಘನ ಪರಿಪೂರ್ಣಪ್ರಸಾದವಳವಟ್ಟ ಶರಣ ಜ್ಞಾನಿಯಲ್ಲ, ಅಜ್ಞಾನಿ ಮುನ್ನವೇ ಅಲ್ಲ. ಶೂನ್ಯನಲ್ಲ, ನಿಃಶೂನ್ಯ ಮುನ್ನವೇ ಅಲ್ಲ. ದ್ವೈತಿಯಲ್ಲ, ಅದ್ವೈತಿ ಮುನ್ನವೇ ಅಲ್ಲ. ಇಂತೀ ಉಭಯಾತ್ಮಕ ತಾನೆಯಾಗಿ ? ಇದು ಕಾರಣ, ಇದರ ಆಗುಹೋಗು ಸಕೀಲಸಂಬಂಧವ ಚೆನ್ನಮಲ್ಲಿಕಾರ್ಜುನಯ್ಯಾ, ನಿಮ್ಮ ಶರಣರೇ ಬಲ್ಲರು.
--------------
ಅಕ್ಕಮಹಾದೇವಿ
ಹುಟ್ಟಿದ ಮನುಜರೆಲ್ಲಾ ಬಂದ ಬಟ್ಟೆಯ ನೋಡಿ ಭ್ರಮೆಗೊಂಡು ಬಳಲುತ್ತೈದಾರೆ. ಇದನರಿದು ಬಂದ ಬಟ್ಟೆಯ ಮೆಚ್ಚಿ, ಕಾಣದ ಹಾದಿಯ ಕಂಡು, ಹೋಗದ ಹಾದಿಯ ಹೋಗುತ್ತಿರಲು, ಕಾಲ ಕಾಮಾದಿಗಳು ಬಂದು ಮುಂದೆ ನಿಂದರು. ಅಷ್ಟಮದಂಗಳು ಬಂದು ಅಡ್ಡಗಟ್ಟಿದವು. ದಶವಾಯು ಬಂದು ಮುಸುಕುತಿವೆ. ಸಪ್ತವ್ಯಸನ ಬಂದು ಒತ್ತರಿಸುತಿವೆ. ಷಡುವರ್ಗ ಬಂದು ಸಮರಸವ ಮಾಡುತಿವೆ. ಕರಣಂಗಳು ಬೆಂದು ಉರಿವುತಿವೆ. ಮರವೆ ಎಂಬ ಮಾಯೆ ಬಂದು ಕಾಡುತಿವಳೆ. ತೋರುವ ತೋರಿಕೆಯೆಲ್ಲವೂ ಸುತ್ತಮೊತ್ತವಾಗಿವೆ. ಇವ ಕಂಡು ಅಂಜಿ ಅಳುಕಿ ಅಂಜನದಿಂದ ನೋಡುತ್ತಿರಲು ತನ್ನಿಂದ ತಾನಾದೆನೆಂಬ ಬಿನ್ನಾಣವ ತಿಳಿದು, ಮುನ್ನೇತರಿಂದಲಾಯಿತು, ಆಗದಂತೆ ಆಯಿತೆಂಬ ಆದಿಯನರಿದು, ಹಾದಿಯ ಹತ್ತಿ ಹೋಗಿ ಕಾಲ ಕಾಮಾದಿಗಳ ಕಡಿದು ಖಂಡಿಸಿ, ಅಷ್ಟಮದಂಗಳ ಹಿಟ್ಟುಗುಟ್ಟಿ, ದಶವಾಯುಗಳ ಹೆಸರುಗೆಡಿಸಿ, ಸಪ್ತವ್ಯಸನವ ತೊತ್ತಳದುಳಿದು, ಷಡ್ವರ್ಗವ ಸಂಹರಿಸಿ, ಕರಣಂಗಳ ಸುಟ್ಟುರುಹಿ, ಮರವೆಯೆಂಬ ಮಾಯೆಯ ಮರ್ಧಿಸಿ, ನಿರ್ಧರವಾಗಿ ನಿಂದು ಸುತ್ತ ಮೊತ್ತವಾಗಿರುವವನೆಲ್ಲ ಕಿತ್ತು ಕೆದರಿ, ಮನ ಬತ್ತಲೆಯಾಗಿ, ಭಾವವಳಿದು ನಿರ್ಭಾವದಲ್ಲಿ ಆಡುವ ಶರಣ, ಅಪ್ಪಣ್ಣಪ್ರಿಯ ಚೆನ್ನಬಸವಣ್ಣ ತಾನೆ ನೋಡಾ.
--------------
ಹಡಪದಪ್ಪಣ್ಣಗಳ ಪುಣ್ಯಸ್ತ್ರೀ ಲಿಂಗಮ್ಮ
ಸಪ್ತದ್ರವ್ಯಂಗಳು ಎಡೆಯಿಲ್ಲದೆ ಹೋದುವು. ಅಷ್ಟಮದಂಗಳು ನಷ್ಟವಾದುವು. ಅರಿಷಡ್ವರ್ಗದುರವಣಿ ತರಹರಿಸಲಾರದೆ ಹೋದವು. ಪಂಚೇಂದ್ರಿಯಂಗಳ ವಂಚನೆ ಬರತವು. ಕರ್ಮೇಂದ್ರಿಯಂಗಳ ವ್ಯಾಪಾರ ನಿಂದವು. ಕಾಮನ ಬಾಣ ಬತ್ತಳಿಕೆಯಲ್ಲಿ ಹಾಯ್ದುವು. ಕಾಲನ ಅಧಿಕಾರ ನಿಂದಿತ್ತು ಮಾಯೆ ಮುಂದುಗೆಟ್ಟು ಮುಖವಿಡಲಮ್ಮದೆ ಹೋಯಿತ್ತು. ನಿಜಗುರು ಸ್ವತಂತ್ರಸಿದ್ಧಲಿಂಗೇಶ್ವರಾ, ನಿಮ್ಮ ಶರಣರ ಮುಂದೆ.
--------------
ಸ್ವತಂತ್ರ ಸಿದ್ಧಲಿಂಗ
ಶೀಲವಂತರೆಲ್ಲ ಅಂತಿರಲಿ, ತಮ್ಮ ತಮ್ಮ ಮನದಿ ಮದವ ಕಳೆದು ತಮ್ಮೊಳಗಿರ್ದ ಭವಿಗಳ ಭಕ್ತರ ಮಾಡಿ ತಮ್ಮಲ್ಲಿರುವ ಅಷ್ಟಮದಂಗಳು, ಸಪ್ತವ್ಯಸನಂಗಳು, ಅರಿಷಡ್ವರ್ಗಂಗಳು, ಪಂಚಭೂತಂಗಳು, ಚತುಷ್ಕರಣಂಗಳು, ತ್ರಿಕರಣಂಗಳು, ತ್ರಿಗುಣಂಗಳು ಶಿವಸಂಸ್ಕಾರದಿಂದ ಲಿಂಗಕರಣಂಗಳೆಂದೆನಿಸಿ ನಿತ್ಯ ಲಿಂಗಾರ್ಚನೆಯ ಮಾಡಬಲ್ಲಾತನೆ ಶೀಲವಂತನಯ್ಯಾ. ಅವನ ಶ್ರೀಪಾದವನು ಹಸ್ತವನೆತ್ತಿ ಹೊಗಳುತಿರ್ದವು ವೇದಂಗಳು: `ಓಂ ಅಯಂ ಮೇ ಹಸ್ತೋ ಭಗವಾನ್ ಅಯಂ ಮೇ ಭಗವತ್ತರಃ ಅಯಂ ಮೇ ವಿಶ್ವಭೇಷಜಃ ಅಯಂ ಶಿವಾಭಿಮರ್ಶನಃ ಅಯಂ ಮಾತಾ ಅಯಂ ಪಿತಾ ' ಇಂತಪ್ಪ ಲಿಂಗದ ಅರ್ಚನೆಯ ಮಾಡಬಲ್ಲಾತನೆ ಸಂಬಂಧಿಯೆನಿಸಿಕೊಳ್ಳಬಲ್ಲನಯ್ಯಾ ಕೂಡಲಚೆನ್ನಸಂಗಮದೇವಾ
--------------
ಚನ್ನಬಸವಣ್ಣ
ಮದ್ಯ ಮಾಂಸಾದಿಗಳ ಮುಟ್ಟೆವೆಂದೆಂಬಿರಿ_ನೀವು ಕೇಳಿರೆ. ಮದ್ಯವಲ್ಲದೇ(ವೇ?)ನು ಅಷ್ಟಮದಂಗಳು ? ಮಾಂಸವಲ್ಲದೇ(ವೇ?)ನು ಸಂಸಾರಸಂಗ ? ಈ ಉಭಯವನತಿಗಳದಾತನೆ, ಗುಹೇಶ್ವರಲಿಂಗದಲ್ಲಿ ಲಿಂಗೈಕ್ಯನು.
--------------
ಅಲ್ಲಮಪ್ರಭುದೇವರು
ನಾನಾ ಯೋನಿಯಲ್ಲಿ ಬಂದು ಫಲವೇನಯ್ಯಾ ಪುಣ್ಯಪಾಪವೆಂದರಿಯದನ್ನಕ್ಕ. ಪುಣ್ಯಪಾಪವೆಂದರಿದಲ್ಲಿ ಫಲವೇನಯ್ಯಾ ಶಿವಭಕ್ತನಾಗದನ್ನಕ್ಕ. ಶಿವಭಕ್ತನಾದಲ್ಲಿ ಫಲವೇನಯ್ಯಾ ಲಿಂಗಜಂಗಮವೆಂದರಿಯದನ್ನಕ್ಕ. ಲಿಂಗಜಂಗಮವೆಂದರಿದಲ್ಲಿ ಫಲವೇನಯ್ಯಾ ಭವಿಯ ಕೊಳುಕೊಡೆ ಹಿಂಗದನ್ನಕ್ಕ. ಭವಿಯ ಕೊಳುಕೊಡೆ ಹಿಂಗಿದಲ್ಲಿ ಫಲವೇನಯ್ಯಾ ಆಶೆಯಾಮಿಷವಳಿಯದನ್ನಕ್ಕ. ಆಶೆಯಾಮಿಷಂಗಳಳಿದಲ್ಲಿ ಫಲವೇನಯ್ಯಾ ಸಮತೆ ನೆಲೆಗೊಳ್ಳದನ್ನಕ್ಕ. ಸಮತೆ ನೆಲೆಗೊಂಡಲ್ಲಿ ಫಲವೇನಯ್ಯಾ ಮೂರುಬಟ್ಟೆಯನರಿಯದನ್ನಕ್ಕ. ಮೂರುಬಟ್ಟೆಯನರಿದಲ್ಲಿ ಫಲವೇನಯ್ಯಾ ಅಷ್ಟಮದಂಗಳು ಬೆಂದು ನಷ್ಟವಾಗದನ್ನಕ್ಕ. ಅಷ್ಟಮದಂಗಳು ಬೆಂದು ನಷ್ಟವಾದಲ್ಲಿ ಫಲವೇನಯ್ಯಾ ಅಮರಗುಂಡದ ಮಲ್ಲಿಕಾರ್ಜುನದೇವರಲ್ಲಿ ಶಿಖಿಕರ್ಪುರದಂತೆ ಅಡಗದನ್ನಕ್ಕ.
--------------
ಪುರದ ನಾಗಣ್ಣ
ಅನಾದಿ ಸದಾಶಿವತತ್ವ, ಅನಾದಿ ಈಶ್ವರತತ್ವ, ಅನಾದಿ ಮಹೇಶ್ವರತತ್ವವೆಂಬ, ಅನಾದಿ ತ್ರಿತತ್ವಂಗಳು ತಾನಲ್ಲ. ಆದಿ ಸದಾಶಿವತತ್ವ, ಆದಿ ಈಶ್ವರತತ್ವ, ಆದಿ ಮಹೇಶ್ವರತತ್ವವೆಂಬ ಆದಿ ತ್ರಿತತ್ವಂಗಳು ತಾನಲ್ಲ. ಶಂಕರ ಶಶಿಧರ ಗಂಗಾಧರ ಗೌರೀಶ ಕಳಕಂಠ ರುದ್ರ, ಕಪಾಲಮಾಲಾಧರ ರುದ್ರ,ಕಾಲಾಗ್ನಿರುದ್ರ, ಏಕಪಾದರುದ್ರ, ಮಹಾಕಾಲರುದ್ರ, ಮಹಾನಟನಾಪಾದರುದ್ರ, ಊಧ್ರ್ವಪಾದರುದ್ರ, ಬ್ರಹ್ಮಕಪಾಲ ವಿಷ್ಣುಕಂಕಾಳವ ಪಿಡಿದಾಡುವ ಪ್ರಳಯಕಾಲರುದ್ರರು, ತ್ರಿಶೂಲ ಖಟ್ವಾಂಗಧರರು ವೃಷಭವಾಹನರು ಪಂಚಮುಖರುದ್ರರು, ಶೂನ್ಯಕಾಯನೆಂಬ ಮಹಾರುದ್ರ, ಅನೇಕಮುಖ ಒಂದುಮುಖವಾಗಿ ವಿಶ್ವರೂಪರುದ್ರ, ವಿಶ್ವಾಧಿಕಮಹಾರುದ್ರ, ಅಂಬಿಕಾಪತಿ ಉಮಾಪತಿ ಪಶುಪತಿ ಮೊದಲಾದ ಗಣಾಧೀಶ್ವರರೆಂಬ ಮಹಾಗಣಂಗಳು ತಾನಲ್ಲ. ಸಹಸ್ರಶಿರ ಸಹಸ್ರಾಕ್ಷ ಸಹಸ್ರಬಾಹು ಸಹಸ್ರಪಾದವನುಳ್ಳ ವಿರಾಟ್ಪುರುಷನು ತಾನಲ್ಲ. ವಿಶ್ವತೋಮುಖ ವಿಶ್ವತೋಚಕ್ಷು ತಾನಲ್ಲ. ವಿಶ್ವತೋಪಾದವನುಳ್ಳ ಮಹಾಪುರುಷ ತಾನಲ್ಲ. ಪತಿ-ಪಶು-ಪಾಶಂಗಳೆಂಬ ಸಿದ್ಧಾಂತಜ್ಞಾನತ್ರಯಂಗಳು ತಾನಲ್ಲ. ತ್ವಂ ಪದ ತತ್‍ಪದ ಅಸಿಪದವೆಂಬ ವೇದಾಂತಪದತ್ರಯ ಪದಾರ್ಥಂಗಳು ತಾನಲ್ಲ. ಜೀವಹಂಸ ಪರಮಹಂಸ ಪರಾಪರಹಂಸನೆಂಬ ಹಂಸತ್ರಯಂಗಳು ತಾನಲ್ಲ. ಬ್ರಹ್ಮ ವಿಷ್ಣು ರುದ್ರ ಈಶ್ವರ ಸದಾಶಿವರೆಂಬ ಪಂಚಮೂರ್ತಿಗಳು ತಾನಲ್ಲ. ಆ ಸದಾಶಿವತತ್ವದಲ್ಲುತ್ಪತ್ಯವಾದ ಪೃಥ್ವಿ ಅಪ್ಪು ತೇಜ ವಾಯು ಆಕಾಶ ಚಂದ್ರ ಸೂರ್ಯಾತ್ಮರೆಂಬ ಅಷ್ಟತನುಮೂರ್ತಿಗಳು ತಾನಲ್ಲ. ಅಸ್ಥಿ ಮಾಂಸ ಚರ್ಮ ನರ ರೋಮ -ಈ ಐದು ಪೃಥ್ವಿಯಿಂದಾದವು. ಪಿತ್ಥ ಶ್ಲೇಷ್ಮ ರಕ್ತ ಶುಕ್ಲ ಮೂತ್ರ -ಈ ಐದು ಅಪ್ಪುವಿನಿಂದಾದವು. ಕ್ಷುದೆ ತೃಷೆ ನಿದ್ರೆ ಆಲಸ್ಯ ಸಂಗ -ಈ ಐದು ಅಗ್ನಿಯಿಂದಾದವು. ಪರಿವ ಪಾರುವ ಸುಳಿವ ಕೂಡುವ ಅಗಲುವ -ಈ ಐದು ವಾಯುವಿನಿಂದಾದವು. ವಿರೋಧಿಸುವ ಅಂಜಿಸುವ ನಾಚುವ ಮೋಹಿಸುವ ಅಹುದಾಗದೆನುವ -ಈ ಐದು ಆಕಾಶದಿಂದಾದವು. ಇಂತೀ ಪಂಚಭೌತಿಕದ ಪಂಚವಿಂಶತಿ ಗುಣಂಗಳಿಂದಾದ ದೇಹವು ತಾನಲ್ಲ. ಶ್ರೋತ್ರ ತ್ವಕ್ಕು ನೇತ್ರ ಜಿಹ್ವೆ ಘ್ರಾಣವೆಂಬ ಜ್ಞಾನೇಂದ್ರಿಯಂಗಳು ತಾನಲ್ಲ. ವಾಕು ಪಾದ ಪಾಣಿ ಪಾಯು ಗುಹ್ಯವೆಂಬ ಕರ್ಮೇಂದ್ರಿಯಂಗಳು ತಾನಲ್ಲ. ಶಬ್ದ ಸ್ಪರ್ಶ ರೂಪ ರಸ ಗಂಧಂಗಳೆಂಬ ಪಂಚವಿಷಯಂಗಳು ತಾನಲ್ಲ, ವಚನ ಗಮನ ದಾನ ವಿಸರ್ಗ ಆನಂದವೆಂಬ ಕರ್ಮೇಂದ್ರಿಯಂಗಳ ತನ್ಮಾತ್ರೆಗಳು ತಾನಲ್ಲ, ಇಡೆ ಪಿಂಗಳೆ ಸುಷುಮ್ನಾ ಗಾಂಧಾರೀ ಹಸ್ತಿಜಿಹ್ವಾ ಪೂಷೆ ಪಯಸ್ವಿನೀ ಅಲಂಬು ಲಕುಹ ಶಂಕಿನೀ-ಎಂಬ ದಶನಾಡಿಗಳು ತಾನಲ್ಲ. ಪ್ರಾಣ ಅಪಾನ ವ್ಯಾನ ಉದಾನ ಸಮಾನ ನಾಗ ಕೂರ್ಮ ಕ್ರಕರ ದೇವದತ್ತ ಧನಂಜಯವೆಂಬ ದಶವಾಯುಗಳು ತಾನಲ್ಲ. ಸ್ಥೂಲತನು, ಸೂಕ್ಷ್ಮತನು, ಕಾರಣತನು, ನಿರ್ಮಲತನು, ಆನಂದತನು, ಚಿನ್ಮಯತನು, ಚಿದ್ರೂಪತನು, ಶುದ್ಧತನುವೆಂಬ ಅಷ್ಟತನುಗಳು ತಾನಲ್ಲ. ಜೀವಾತ್ಮ ಅಂತರಾತ್ಮ ಪರಮಾತ್ಮ ನಿರ್ಮಲಾತ್ಮ ಶುದ್ಧಾತ್ಮ ಜ್ಞಾನಾತ್ಮ ಭೂತಾತ್ಮ ಮಹಾತ್ಮವೆಂಬ ಅಷ್ಟ ಆತ್ಮಂಗಳು ತಾನಲ್ಲ. ಸಂಸ್ಥಿತ ತೃಣೀಕೃತ ವರ್ತಿನಿ ಕ್ರೋಧಿನಿ ಮೋಹಿನಿ ಅತಿಚಾರಿಣಿ ಗಂಧಚಾರಿಣಿ ವಾಸಿನಿಯೆಂಬ ಅಂತರಂಗದ ಅಷ್ಟಮದಂಗಳು ತಾನಲ್ಲ. ಕುಲ ಛಲ ಧನ ರೂಪ ಯೌವ್ವನ ವಿದ್ಯೆ ರಾಜ್ಯ ತಪವೆಂಬ ಬಹಿರಂಗ ಅಷ್ಟಮದಂಗಳು ತಾನಲ್ಲ. ರಸ ರುಧಿರ ಮಾಂಸ ಮೇದಸ್ಸು ಅಸ್ಥಿ ಮಜ್ಜೆ ಶುಕ್ಲವೆಂಬ ಸಪ್ತಧಾತುಗಳು ತಾನಲ್ಲ. ತನುವ್ಯಸನ, ಮನವ್ಯಸನ, ಧನವ್ಯಸನ, ರಾಜ್ಯವ್ಯಸನ, ವಿಶ್ವವ್ಯಸನ, ಉತ್ಸಾಹವ್ಯಸನ, ಸೇವಕವ್ಯಸನವೆಂಬ ಸಪ್ತವ್ಯಸನಂಗಳು ತಾನಲ್ಲ. ಕ್ಷುತ್ ಪಿಪಾಸೆ ಶೋಕ ಮೋಹ ಜನನ ಮರಣವೆಂಬ ಷಡೂರ್ಮಿಗಳು ತಾನಲ್ಲ. ಕಾಮ ಕ್ರೋಧ ಲೋಭ ಮೋಹ ಮದ ಮತ್ಸರವೆಂಬ ಅರಿಷಡ್ವರ್ಗಂಗಳು ತಾನಲ್ಲ. ಜಾತಿ, ವರ್ಣ, ಆಶ್ರಮ, ಕುಲ, ಗೋತ್ರ, ನಾಮಗಳೆಂಬ ಷಟ್‍ಭ್ರಮೆಗಳು ತಾನಲ್ಲ. ಆಸ್ತಿ, ಜಾಯತೇ, ಪರಿಣಮತೇ, ವರ್ಧತೇ, ವಿನಶ್ಯತಿ, ಅಪಕ್ಷೀಯತೇ ಎಂಬ ಷಡ್ಭಾವವಿಕಾರಂಗಳು ತಾನಲ್ಲ. ಅನ್ನಮಯ ಪ್ರಾಣಮಯ ಮನೋಮಯ ವಿಜ್ಞಾನಮಯ ಆನಂದಮಯವೆಂಬ ಪಂಚಕೋಶಂಗಳು ತಾನಲ್ಲ. ಸತ್ವ ರಜ ತಮೋಗುಣತ್ರಯಂಗಳು ತಾನಲ್ಲ. ಅಧ್ಯಾತ್ಮಿಕ, ಆಧಿದೈವಿಕ, ಆಧಿಭೌತಿಕವೆಂಬ ತಾಪತ್ರಯಂಗಳು ತಾನಲ್ಲ. ವಿಶ್ವ ತೈಜಸ ಪ್ರಾಜ್ಞವೆಂಬ ಜೀವತ್ರಯಂಗಳು ತಾನಲ್ಲ. ವಾತ ಪಿತ್ಥ ಕಫಂಗಳೆಂಬ ದೋಷತ್ರಯಂಗಳು ತಾನಲ್ಲ. ಆಣವ ಮಾಯಾ ಕಾರ್ಮಿಕವೆಂಬ ಮಲತ್ರಯಂಗಳು ತಾನಲ್ಲ. ಸುಖ ದುಃಖ ಪುಣ್ಯ ಪಾಪಂಗಳು ತಾನಲ್ಲ. ಸಂಚಿತ, ಪ್ರಾರಬ್ಧ, ಆಗಾಮಿಯೆಂಬ ಕರ್ಮತ್ರಯಂಗಳು ತಾನಲ್ಲ. ಅಗ್ನಿಮಂಡಲ, ಆದಿತ್ಯಮಂಡಲ, ಚಂದ್ರಮಂಡಲವೆಂಬ ಮಂಡಲತ್ರಯಂಗಳು ತಾನಲ್ಲ. ಆಧಾರ, ಸ್ವಾಧಿಷಾ*ನ, ಮಣಿಪೂರಕ, ಅನಾಹತ, ವಿಶುದ್ಧಿ, ಆಜ್ಞೆ ಎಂಬ ಷಡುಚಕ್ರಂಗಳ ದಳ ವರ್ಣ ಅಕ್ಷರಂಗಳು ತಾನಲ್ಲ. ಜಾಗ್ರ ಸ್ವಪ್ನ ಸುಷುಪ್ತಿ ತೂರ್ಯ ತೂರ್ಯಾತೀತಗಳೆಂಬ ಪಂಚಾವಸ್ಥೆಗಳು ತಾನಲ್ಲ. ಜಾಗ್ರದಲ್ಲಿಯ ಜಾಗ್ರ, ಜಾಗ್ರದಲ್ಲಿಯ ಸ್ವಪ್ನ, ಜಾಗ್ರದಲ್ಲಿಯ ಸುಷುಪ್ತಿ, ಜಾಗ್ರದಲ್ಲಿಯ ತೂರ್ಯ, ಜಾಗ್ರದಲ್ಲಿಯ ತೂರ್ಯಾತೀತವೆಂಬ ಜಾಗ್ರಪಂಚಾವಸ್ಥೆಗಳು ತಾನಲ್ಲ. ಸ್ವಪ್ನದಲ್ಲಿಯ ಜಾಗ್ರ, ಸ್ವಪ್ನದಲ್ಲಿಯ ಸ್ವಪ್ನ, ಸ್ವಪ್ನದಲ್ಲಿಯ ಸುಷುಪ್ತಿ, ಸ್ವಪ್ನದಲ್ಲಿಯ ತೂರ್ಯ, ಸ್ವಪ್ನದಲ್ಲಿಯ ತೂರ್ಯಾತೀತವೆಂಬ ಸ್ವಪ್ನಪಂಚಾವಸ್ಥೆಗಳು ತಾನಲ್ಲ. ಸುಷುಪ್ತಿಯಲ್ಲಿಯ ಜಾಗ್ರ, ಸುಷುಪ್ತಿಯಲ್ಲಿಯ ಸ್ವಪ್ನ, ಸುಷುಪ್ತಿಯಲ್ಲಿಯ ಸುಷುಪ್ತಿ , ಸುಷುಪ್ತಿಯಲ್ಲಿಯ ತೂರ್ಯ, ಸುಷುಪ್ತಿಯಲ್ಲಿಯ ತೂರ್ಯಾತೀತವೆಂಬ ಸುಷುಪ್ತಿಯ ಪಂಚಾವಸ್ಥೆಗಳು ತಾನಲ್ಲ. ತೂರ್ಯದಲ್ಲಿಯ ಜಾಗ್ರ, ತೂರ್ಯದಲ್ಲಿಯ ಸ್ವಪ್ನ, ತೂರ್ಯದಲ್ಲಿಯ ಸುಷುಪ್ತಿ, ತೂರ್ಯದಲ್ಲಿಯ ತೂರ್ಯ, ತೂರ್ಯದಲ್ಲಿಯ ತೂರ್ಯಾತೀತವೆಂಬ ತೂರ್ಯಪಂಚಾವಸ್ಥೆಗಳು ತಾನಲ್ಲ. ತೂರ್ಯಾತೀತದಲ್ಲಿಯ ಜಾಗ್ರ, ತೂರ್ಯಾತೀತದಲ್ಲಿಯ ಸ್ವಪ್ನ , ತೂರ್ಯಾತೀತದಲ್ಲಿಯ ಸುಷುಪ್ತಿ, ತೂರ್ಯಾತೀತದಲ್ಲಿಯ ತೂರ್ಯ, ತೂರ್ಯಾತೀತದಲ್ಲಿಯ ತೂರ್ಯಾತೀತವೆಂಬ ತೂರ್ಯಾತೀತಪಂಚಾವಸ್ಥೆಗಳು ತಾನಲ್ಲ. ಸಕಲ-ಶುದ್ಧ-ಕೇವಲಾವಸ್ಥೆಗಳು ತಾನಲ್ಲ. ಸಕಲದಲ್ಲಿಯ ಸಕಲ, ಸಕಲದಲ್ಲಿಯ ಶುದ್ಧ, ಸಕಲದಲ್ಲಿಯ ಕೇವಲವೆಂಬ ಸಕಲತ್ರಿಯಾವಸ್ಥೆಗಳು ತಾನಲ್ಲ. ಶುದ್ಧದಲ್ಲಿಯ ಸಕಲ, ಶುದ್ಧದಲ್ಲಿಯ ಶುದ್ಧ, ಶುದ್ಧದಲ್ಲಿಯ ಕೇವಲವೆಂಬ ಶುದ್ಧತ್ರಿಯಾವಸ್ಥೆಗಳು ತಾನಲ್ಲ. ಕೇವಲದಲ್ಲಿಯ ಸಕಲ, ಕೇವಲದಲ್ಲಿಯ ಶುದ್ಧ, ಕೇವಲದಲ್ಲಿಯ ಕೇವಲವೆಂಬ ಕೇವಲತ್ರಿಯಾವಸ್ಥೆಗಳು ತಾನಲ್ಲ. ಜ್ಞಾತೃ ಜ್ಞಾನ ಜ್ಞೇಯವೆಂಬ ಜ್ಞಾನತ್ರಯಂಗಳು ತಾನಲ್ಲ. ಯಮ ನಿಯಮ ಆಸನ ಪ್ರಾಣಾಯಾಮ ಪ್ರತ್ಯಾಹಾರ ಧ್ಯಾನ ಧಾರಣ ಸಮಾಧಿಯೆಂಬ ಅಷ್ಟಾಂಗಯೋಗಂಗಳು ತಾನಲ್ಲ. ಧರ್ಮ ಅರ್ಥ ಕಾಮ ಮೋಕ್ಷಂಗಳೆಂಬ ಚತುರ್ವಿಧ ಪುರುಷಾರ್ಥಂಗಳು ತಾನಲ್ಲ. ಸಾಲೋಕ್ಯ ಸಾಮೀಪ್ಯ ಸಾರೂಪ್ಯ ಸಾಯುಜ್ಯವೆಂಬ ಚತುರ್ವಿಧಪದಂಗಳು ತಾನಲ್ಲ. ಅಣಿಮಾ ಗರಿಮಾ ಲಘಿಮಾ ಮಹಿಮಾ ಪ್ರಾಪ್ತಿ ಪ್ರಕಾವ್ಯ ಇಶಿತ್ವ ವಶಿತ್ವ ಎಂಬ ಅಷ್ಟಮಹದೈಶ್ವರ್ಯಂಗಳು ತಾನಲ್ಲ. ರಾಜಸಹಂಕಾರ ತಾಮಸಹಂಕಾರ ಸ್ವಹಂಕಾರವೆಂಬ ಅಹಂಕಾರತ್ರಯಂಗಳು ತಾನಲ್ಲ. ಅಂಜನಾಸಿದ್ಧಿ, ಘುಟಿಕಾಸಿದ್ಧಿ, ರಸಸಿದ್ಧಿ, ಪಾದೋದಕಸಿದ್ಧಿ, ಪರಕಾಯ ಪ್ರವೇಶ, ದೂರಶ್ರವಣ, ದೂರದೃಷ್ಟಿ, ತ್ರಿಕಾಲಜ್ಞಾನವೆಂಬ ಅಷ್ಟಮಹಾಸಿದ್ಧಿಗಳು ತಾನಲ್ಲ. ಉದರಾಗ್ನಿ ಮಂದಾಗ್ನಿ ಶೋಕಾಗ್ನಿ ಕ್ರೋಧಾಗ್ನಿ ಕಾಮಾಗ್ನಿಯೆಂಬ ಪಂಚಾಗ್ನಿಗಳು ತಾನಲ್ಲ. ಪ್ರಕೃತಿ, ಪುರುಷ, ಕಾಲ, ಪರ, ವ್ಯೋಮಾಕಾಶಂಗಳು ತಾನಲ್ಲ. ಊಧ್ರ್ವಶೂನ್ಯ, ಅಧಃಶೂನ್ಯ, ಮಧ್ಯಶೂನ್ಯ, ಸರ್ವಶೂನ್ಯವಾಗಿಹ ಸಹಜನಿರಾಲಂಬವೇ ತಾನೆಂದರಿದ ಮಹಾಶರಣಂಗೆ ನಾಮ ರೂಪ ಕ್ರಿಯಾತೀತವಾಗಿಹ ಮಹಾಘನವೇ ತನ್ನ ಶಿರಸ್ಸು ನೋಡಾ. ದಿವ್ಯಜ್ಞಾನವೇ ತನ್ನ ಚಕ್ಷು, ಅಚಲಪದವೇ ತನ್ನ ಪುರ್ಬು, ಅಚಲಾತೀತವೇ ತನ್ನ ಹಣೆ ನೋಡಾ. ನಿರಾಕುಳಪದವೇ ತನ್ನ ನಾಸಿಕ, ನಿರಂಜನಾತೀತವೆ ತನ್ನ ಉಶ್ವಾಸ-ನಿಶ್ವಾಸ ನೋಡಾ. ನಿರಾಮಯವೇ ತನ್ನ ಕರ್ಣ, ನಿರಾಮಯಾತೀತವೇ ತನ್ನ ಕರ್ಣದ್ವಾರ ನೋಡಾ. ಅಮಲ ನಿರ್ಮಲವೇ ತನ್ನ ಗಲ್ಲ, ಅಮಲಾತೀತವೇ ತನ್ನ ಗಡ್ಡಮೀಸೆ ಕೋರೆದಾಡೆ ನೋಡಾ. ನಾದಬಿಂದುಕಳಾತೀತವೆ ತನ್ನ ತಾಳೋಷ*ಸಂಪುಟ ನೋಡಾ. ಅಕಾರ, ಉಕಾರ, ಮಕಾರ, ನಾದ ಬಿಂದು ಅರ್ಧಚಂದ್ರ ನಿರೋದಿನಾದಾಂತ ಶಕ್ತಿವ್ಯಾಪಿನಿ ವ್ಯೋಮರೂಪಿಣಿ ಅನಂತ ಆನಂದ ಅನಾಶ್ರಿತ ಸುಮನೆ ಉನ್ಮನಿ ಇಂತೀ ಪ್ರಣವದಲ್ಲಿ ಉತ್ಪತ್ಯವಾದ ಷೋಡಶಕಳೆ ತನ್ನ ಷೋಡಶ ದಂತಂಗಳು ನೋಡಾ. ಆ ದಂತಂಗಳ ಕಾಂತಿ ಅನೇಕಕೋಟಿ ಸಿಡಿಲೊಡೆದ ಬಯಲಪ್ರಕಾಶವಾಗಿಹುದು ನೋಡಾ. ತನ್ನ ಕೊರಳೆ ನಿರಾಕುಳ, ತನ್ನ ಭುಜಂಗಳೆ ಅಪ್ರಮಾಣ ಅಗೋಚರ ನೋಡಾ. ತನ್ನ ಹಸ್ತಾಂಗುಲಿ ನಖಂಗಳೆ ಪರತತ್ವ, ಶಿವತತ್ವ, ಗುರುತತ್ವ, ಲಿಂಗತತ್ವಂಗಳು ನೋಡಾ. ಪರಬ್ರಹ್ಮವೇ ತನ್ನ ಎದೆ, ಆ ಪರಬ್ರಹ್ಮವೆಂಬ ಎದೆಯಲ್ಲಿ ನಿರಂಜನಪ್ರಣವ ಅವಾಚ್ಯಪ್ರಣವವೆಂಬ ಸಣ್ಣ ಕುಚಂಗಳು ನೋಡಾ. ಚಿತ್ತಾಕಾಶ ಭೇದಾಕಾಶವೆ ತನ್ನ ದಕ್ಷಿಣ ವಾಮ ಪಾಶ್ರ್ವಂಗಳು ನೋಡಾ. ಬಿಂದ್ವಾಕಾಶವೇ ತನ್ನ ಬೆನ್ನು ನೋಡಾ. ಮಹಾಕಾಶವೇ ತನ್ನ ಬೆನ್ನ ನಿಟ್ಟೆಲವು ನೋಡಾ. ಪಂಚಸಂಜ್ಞೆಯನುಳ್ಳ ಅಖಂಡಗೋಳಕಾಕಾರಲಿಂಗವೆ ತನ್ನ ಗರ್ಭ ನೋಡಾ. ಆ ಗರ್ಭ ಅನೇಕಕೋಟಿ ಸೂರ್ಯಚಂದ್ರಾಗ್ನಿ ಪ್ರಕಾಶವಾಗಿಹುದುನೋಡಾ. ಆ ಗರ್ಭದಲ್ಲಿ ಅನೇಕಕೋಟಿತತ್ವಂಗಳು, ಅನೇಕಕೋಟಿ ಸದಾಶಿವರು, ಅನೇಕಕೋಟಿ ಮಹೇಶ್ವರರು ಅಡಗಿಹರು ನೋಡಾ. ಆ ಗರ್ಭದಲ್ಲಿ ಅನೇಕಕೋಟಿ ಸದಾಶಿವರು, ಅನೇಕಕೋಟಿರುದ್ರರು, ಅನೇಕಕೋಟಿ ವಿಷ್ಣಾ ್ವದಿಗಳಡಗಿಹರು ನೋಡಾ. ಆ ಗರ್ಭದಲ್ಲಿ ಅನೇಕಕೋಟಿ ಬ್ರಹ್ಮರು, ಅನೇಕಕೋಟಿ ಋಷಿಗಳು ಅನೇಕಕೋಟಿ ಚಂದ್ರಾದಿತ್ಯರು ಅಡಗಿಹರು ನೋಡಾ. ಆ ಗರ್ಭದಲ್ಲಿ ಅನೇಕಕೋಟಿ ಇಂದ್ರರು, ಅನೇಕಕೋಟಿ ದೇವರ್ಕಗಳು, ಅನೇಕಕೋಟಿ ಬ್ರಹ್ಮಾಂಡಗಳಡಗಿಹವು ನೋಡಾ. ತನ್ನ ನಡುವೆ ವ್ಯೋಮಾತೀತವು, ತನ್ನ ಕಟಿಸ್ಥಾನವೇ ಕಲಾಪ್ರಣವ, ತನ್ನ ಪಚ್ಚಳವೆ ಅನಾದಿಪ್ರಣವ ಆದಿಪ್ರಣವ ನೋಡಾ. ತನ್ನ ಉಪಸ್ಥವೇ ಬ್ರಹ್ಮ, ವಿಷ್ಣು, ರುದ್ರ, ಈಶ್ವರ, ಸದಾಶಿವ ಮೊದಲಾದ ಸಮಸ್ತ ದೇವರ್ಕಗಳಿಗೂ ಜನನಸ್ಥಳವಾಗಿಹ ನಿರ್ವಾಣಪದ ನೋಡಾ. ಶಿವಸಂಬಂಧ, ಶಕ್ತಿಸಂಬಂಧವಾಗಿಹ ಓಂಕಾರವೆ ತನ್ನ ಒಳದೊಡೆ ನೋಡಾ. ಸಚ್ಚಿದಾನಂದ ಪರಮಾನಂದವೆ ತನ್ನ ಒಳಪಾದ ಕಂಬಗಳು ನೋಡಾ. ಚಿದಾತ್ಮ ಪರಮಾತ್ಮನೆ ತನ್ನ ಹರಡು, ಅತಿಸೂಕ್ಷ್ಮಪಂಚಾಕ್ಷರವೆ ತನ್ನ ಪಾದಾಂಗುಷಾ*ಂಗುಲಿಗಳೆಂಬ ಸಾಯುಜ್ಯಪದ ನೋಡಾ. ತನ್ನ ಸ್ವರವೆ ಪರಾಪರ, ತನ್ನ ಮಾತೇ ಮಹಾಜ್ಯೋತಿರ್ಮಯಲಿಂಗ, ಚಿನ್ಮಯ ಚಿದ್ರೂಪ ಚಿತ್ಪ್ರಕಾಶವೆ ತನ್ನ ವಪೆ ನೋಡಾ. ಇಷ್ಟಲಿಂಗ, ಪ್ರಾಣಲಿಂಗ, ಭಾವಲಿಂಗ, ಆಚಾರಲಿಂಗ, ಗುರುಲಿಂಗ, ಶಿವಲಿಂಗ, ಜಂಗಮಲಿಂಗ, ಪ್ರಸಾದಲಿಂಗ, ಮಹಾಲಿಂಗ ಮೊದಲಾಗಿ ಇನ್ನೂರ ಹದಿನಾರು ಷಡುಸ್ಥಲಲಿಂಗವೆ ತನ್ನಂತಃಸ್ಥಾನದಲ್ಲಿ ಧರಿಸಿಹ ಆಭೂಷಣಂಗಳು ನೋಡಾ. ಮಹಾಲಿಂಗವೇ ತುರುಬು, ಶಿವಜ್ಞಾನವೆ ಶೃಂಗಾರವಾಗಿಹ ತನ್ನ ತಾನರಿದು ಅಂತಃಶೂನ್ಯ, ಅಧಃಶೂನ್ಯ, ಬಹಿಃಶೂನ್ಯ, ದಶದಿಶಾಶೂನ್ಯ ನಿರಾಕಾರವಾಗಿಹ ತನ್ನ ಅಂಗ ಪ್ರತ್ಯಂಗ ಸ್ವರೂಪ ಸ್ವಭಾವಂಗಳ ತಿಳಿದು ಮಹಾಶರಣನು ತಾನೆ ಗುರು, ತಾನೆ ಲಿಂಗ, ತಾನೆ ಜಂಗಮ, ತಾನೆ ಪರಮಪಾದೋದಕಪ್ರಸಾದ ನೋಡಾ. ತಾನೆ ನಾದಬಿಂದುಕಳಾತೀತ ನೋಡಾ. ತಾನೆ ಶೂನ್ಯ ನಿಶ್ಶೂನ್ಯನು, ತಾನೆ ಘನಶೂನ್ಯ, ಮಹಾಘನಶೂನ್ಯ ನೋಡಾ. ತಾನೆ ಬಯಲು ನಿರ್ಬಯಲು, ತಾನೆ ನಿರುಪಮ ನಿರಾಕಾರ ತಾನೆ ನಿರಾಳ ನಿರಾಲಂಬ ನೋಡಾ. ತಾನೆ ಸಚ್ಚಿದಾನಂದ ನಿತ್ಯಪರಿಪೂರ್ಣನು, ತನ್ನಿಂದಧಿಕವಪ್ಪ ಪರಬ್ರಹ್ಮವೊಂದಿಲ್ಲವಾಗಿ ತಾನೆ ಸ್ವಯಂಜ್ಯೋತಿರ್ಲಿಂಗ ನೋಡಾ ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಎನ್ನ ಪ್ರಾಣ ಮನ ಬುದ್ಧಿ ಚಿತ್ತಂಗಳು ನಿಮ್ಮ ತೊತ್ತಿರಯ್ಯಾ. ಸತ್ವ ರಜ ತಮಂಗಳು ನಿಮ್ಮ ಭೃತ್ಯರಯ್ಯಾ. ಅಂತಃಕರಣ ಚತುಷ್ಟಯಂಗಳು ನಿಮ್ಮ ಮಂತ್ರಿಗಳಯ್ಯಾ. ಪಂಚೇಂದ್ರಿಯಂಗಳು ನಿಮ್ಮ ಪಡಿಹಾರರಯ್ಯಾ. ಅರಿಷಡ್ವರ್ಗಂಗಳು ನಿಮ್ಮ ಲೆಂಕರಯ್ಯಾ. ಸಪ್ತಧಾತುಗಳು ನಿಮ್ಮ ಬಾಣಸಿಗರಯ್ಯಾ. ಅಷ್ಟಮದಂಗಳು ನಿಮ್ಮ ಭಂಡಾರಿಗಳಯ್ಯಾ. ನವರಸಂಗಳು ನಿಮ್ಮ ಭಂಡಾರಿಗಳಯ್ಯಾ. ದಶವಾಯಗಳು ನಿಮ್ಮ ಛತ್ರ ಚಾಮರ ಸೀಗುರಿಗಳಯ್ಯಾ. ಷೋಡಶಕಳೆಗಳು ನಿಮ್ಮ ರಾಣಿವಾಸವಯ್ಯಾ. ಶಂಭು ಸೋಮನಾಥಲಿಂಗ, ನಿಮಗೆನ್ನ ಕಾಯ ಮುಂತಾಗಿ ಬಾಹತ್ತರ ಡಿಂಗರಿಗರಯ್ಯಾ!
--------------
ಜೋದರ ಮಾಯಣ್ಣ
ಜೀವನ್ಮುಕ್ತಿ ಯಾವುದೆಂದಡೆ ಹೇಳಿಹೆ ಕೇಳಿರಯ್ಯಾ. ಜೀವನ ಬುದ್ಧಿಯ ಬಿಟ್ಟುದು ಜೀವನ್ಮುಕ್ತಿ. ಜೀವನ ಬುದ್ಧಿ ಯಾವುದೆಂದಡೆ : ಜ್ಞಾನಗುರುಗಳಿಂದ ಜ್ಞಾನವ ಪಡೆದು ಅಂಗಲಿಂಗಸಂಗ ಸಮರಸವಾದುದೇ ಜೀವನ್ಮುಕ್ತಿ. ಇಂಥದ ಬಿಟ್ಟು ತಾನು ಮಂಗಬುದ್ಧಿಯಿಂದ ನಡೆದು ಜ್ಞಾನಪ್ರಕಾಶವ ಕಾಣಲಿಲ್ಲವೆಂದು ಮತ್ತೊಬ್ಬ ಗುರುಗಳಲ್ಲಿ ತಿಳಿಯಬೇಕೆಂಬರು. ಅವರಲ್ಲಿ ಏನು ಇದ್ದಿತೊ ! ಹೀಗೆಂಬುದೇ ಜೀವನ ಬುದ್ದಿಯು. ಹೊಲವ ಬಿತ್ತುವ ಒಕ್ಕಲಿಗ ಯಾವನಾದಡೆ ಆಗಲಿ ಬೀಜವ ಬಿತ್ತುವ ಪರಿ ಒಂದೇ. ಮತ್ತೆ ಗೊಲ್ಲಾಳಯ್ಯಂಗೆ ಕುರಿಯ ಹಿಕ್ಕೆಯ ದೃಢದಿಂದ ಪೂಜಿಸಿ ಗುರು ಪ್ರಸನ್ನತೆಯ ಹಡೆದುದಿಲ್ಲವೆ ? ಅವಿಶ್ವಾಸದಿಂದೆ, ಅಂಗಬುದ್ಧಿಯಿಂದೆ ಹಲವು ಗುರು, ಹಲವು ಲಿಂಗ ಅರ್ಚಿಸಿ ಪೂಜಿಸಿ ಹಲವು ಭವದಲ್ಲಿ ಬಂದರು ನೋಡಾ ! ಜೀವನ ಬುದ್ಧಿ ಎಂತೆಂದಡೆ : ಆಶೆ ರೋಷ ಅಹಂಕಾರ ಅರಿಷಡ್ವರ್ಗಂಗಳು ಅಷ್ಟಮದಂಗಳು, ಅನೃತ, ಪರಧನ, ಪರಸ್ತ್ರೀ, ಪರನಿಂದೆ, ಪರಹಿಂಸೆ ಇವೆಲ್ಲವೂ ಜೀವನಬುದ್ಧಿ. ಇಂತಿವೆಲ್ಲವ ಒಳಗಿಟ್ಟುಕೊಂಡು ನಾವು ಜೀವನ್ಮುಕ್ತರೆಂಬರು ಎಂತಹರೋ ನೋಡಾ! ದೀಪವೆಂದಡೆ ಕತ್ತಲೆ ಹೋಯಿತ್ತೆ ? ಅಮೃತವೆಂದಡೆ ಹಸಿವು ಹೋಯಿತ್ತೆ ? ಉದಕವೆಂದಡೆ ತೃಷೆ ಹೋಯಿತ್ತೆ ? ಇಂಥವರಿಗೆ ಮುಕ್ತಿಯಿಲ್ಲವಯ್ಯಾ. ಮತ್ತೆ ಜೀವನ್ಮುಕ್ತಿ ಹೇಗೆಂದಡೆ - ಶರಣಸತಿ ಲಿಂಗಪತಿಯೆಂಬ ಭೇದವ ತಿಳಿದಡೆ ಜೀವನ್ಮುಕ್ತಿ. ಈ ತ್ರಿವಿಧತನವು ಮೀಸಲಾಗಿ ತ್ರಿವಿಧಲಿಂಗಕ್ಕೆ ಅರ್ಪಿಸಬಲ್ಲಾತನೆ ಜೀವನ್ಮುಕ್ತನು ಎಂದಾತ ನಮ್ಮ ಶಾಂತಕೂಡಲಸಂಗಮದೇವ.
--------------
ಗಣದಾಸಿ ವೀರಣ್ಣ
ಅಜ್ಞಾನ ಹಿಂಗಿತ್ತು, ಅಹಂಕಾರವಡಗಿತ್ತು, ಅರಿಷಡ್ವರ್ಗಂಗಳು ಹರಿಹಂಚಾದವು, ಅಷ್ಟಮದಂಗಳು ಪಟ್ಟಪರಿಯಾದವು, ದಶವಾಯುಗಳು ವಶವರ್ತಿಯಾದವು, ಇಂದ್ರಿಯಂಗಳು ಬಂಧನವಡೆದವು, ಮನೋವಿಕಾರ ನಿಂದಿತ್ತು. ಕೂಡಲಸಂಗಮದೇವಾ, ನಿಮ್ಮಲ್ಲಿ ನಮ್ಮ ಮಹಾದೇವಿಯಕ್ಕಗಳ ನಿರ್ವಾಣದ ಸಹಜ ನಿಲವ ಕಂಡು, ನಮೋ ನಮೋ ಎನುತಿರ್ದೆನಯ್ಯಾ, ಪ್ರಭುವೆ.
--------------
ಬಸವಣ್ಣ
-->