ಅಥವಾ

ಒಟ್ಟು 38 ಕಡೆಗಳಲ್ಲಿ , 13 ವಚನಕಾರರು , 31 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಬ್ರಹ್ಮವೆಂಬ ವೃಕ್ಷದಲ್ಲಿ ಫಲಪತ್ರಕುಸುಮಂಗಳೆಂಬ ಸಚರಾಚರಂಗಳಷ್ಟಮೂರ್ತಿಗಳಾಗಿ ಆಗಿ ಆಗಿ ಅಳಿವುತ್ತಿಪ್ಪವಯ್ಯಾ. ಇದಕ್ಕೆ ಶ್ರುತಿ: ಬ್ರಹ್ಮಣೋ ವೃಕ್ಷಾನ್ಮಹತೋ ಪತ್ರಂ ಕುಸುಮಿತಂ ಫಲಂ ಚರಾಚರಾಷ್ಟಮೂರ್ತಿಂ ಚ ಫಲಿತಂ ಫಲಶೂನ್ಯವತ್ ಇಂತೆಂದುದಾಗಿ, ಅಷ್ಟಮೂರ್ತಿಗಳು ನಷ್ಟವಾದಲ್ಲಿ ಸೌರಾಷ್ಟ್ರ ಸೋಮೇಶ್ವರಲಿಂಗ ನಷ್ಟವಾಯಿತ್ತೆಂಬ ಮಿಟ್ಟಿಯ ಭಂಡರನೇನೆಂಬೆನಯ್ಯಾ.
--------------
ಆದಯ್ಯ
ಕುಲಮದ ಪೊತ್ತಲ್ಲಿ ಚಂಡಾಲಗಿತ್ತಿಯಾಗಿ ಕೆಡಿಸಿತ್ತು ಮಾಯೆ, ಮಯೂರನೃಪಗೆ. ಛಲಮದ ಪೊತ್ತಲ್ಲಿ ಮಾಂಸ ಭೋಗಿಸಿತ್ತು ಮಾಯೆ, ವೀರ ವಿಕ್ರಮಗೆ. ಧನಮದ ಪೊತ್ತಲ್ಲಿ ದರಿದ್ರವಾಗಿ ಕಾಡಿತ್ತು ಮಾಯೆ, ಹರಿಶ್ಚಂದ್ರಂಗೆ, ರೂಪಮದ ಪೊತ್ತಲ್ಲಿ ಕುರೂಪನ ಮಾಡಿತ್ತು ಮಾಯೆ, ನಳಂಗೆ. ಯೌವನಮದ ಪೊತ್ತಲ್ಲಿ ಹಿಡಿಂಬಿಯಾಗಿ ಕಾಡಿತ್ತು ಮಾಯೆ, ಬ್ಥೀಮಂಗೆ. ವಿದ್ಯಾಮದ ಪೊತ್ತಲ್ಲಿ ಅಜ್ಞಾನವಾಗಿ ಕಾಡಿತ್ತು ಮಾಯೆ, ಅಂದು ಪರ್ವತದಲ್ಲಿ ಕವಿ ವಾದಿಶೇಖರಂಗೆ. ರಾಜಮದ ಪೊತ್ತಲ್ಲಿ ರಾಕ್ಷಸನ ಮಾಡಿತ್ತು ಮಾಯೆ, ಮುಮ್ಮಡಿ ಸಿಂಗನೃಪಂಗೆ. ತಪೋಮದ ಪೊತ್ತಲ್ಲಿ ಹಲವು ಆಗಿ ಕಾಡಿತ್ತು ಮಾಯೆ, ವಿಶ್ವಾಮಿತ್ರಂಗೆ. ಇಂತೀ ಅಷ್ಟಮದವಳಿದು ಅಷ್ಟಾವರಣ ಧರಿಸಿಪ್ಪ ಮಹಾಗಣಂಗಳು ಲಯವಿಲ್ಲದ ರಾಜಯೋಗವ ಪಡೆದಿಹರಯ್ಯಾ. ಕಪಿಲಸಿದ್ಧಮಲ್ಲಿಕಾರ್ಜುನಾ.
--------------
ಸಿದ್ಧರಾಮೇಶ್ವರ
ಅಂಗ ಲಿಂಗ್ವ ಒಂದಾದ ಬಳಿಕ [ಅಂ]ಗೇಂದ್ರಿಯಂಗಳಾಚರಿಸಲಾಗದು. ಅಂಗೇಂ್ರಯಂಗಳು ಹೋಗಿ ಲಿಂಗೇಂದ್ರಿಯಂಗಳಾಗಿ ಆಚರಿಸುವುದು. `ಘೃತೋ ಭೂತ್ವಾ ಕಥಂ ಕ್ಷೀರಂ ಭವತ್ಯೇವಂ ವರಾನನೇ' ಎಂಬಾಗಮೋಕ್ತಿ ಪುಸಿಯಾಯಿತ್ತೆ? ಆಗಿ ಆಚರಿಸಿದಡೆ ಭವ ಹಿಂಗದು ನೋಡಾ, ಕಪಿಲಸಿದ್ಧಮಲ್ಲಿಕಾರ್ಜುನಾ.
--------------
ಸಿದ್ಧರಾಮೇಶ್ವರ
ಅಯ್ಯಾ, ಕೊಟ್ಟ ಲಿಂಗವ ಮರಳಿ ಕೊಂಡು ಬಾ ಎಂದು ಎನ್ನನಟ್ಟಿದನಯ್ಯಾ ಶಶಿಧರನು ಮತ್ರ್ಯಕ್ಕೆ. ನಿಮ್ಮ ಮುಖದಿಂದ ಎನ್ನ ಭವ ಹರಿವುದೆಂದು ಹರಹಿಕೊಂಡಿದ್ದೆನಯ್ಯಾ ದಾಸೋಹವನು. ನಿಮ್ಮ ಬರವ ಹಾರಿ ಸವೆದವು ಒಂದನಂತ ದಿನಗಳು, ಇಂದೆನ್ನ ಪುಣ್ಯದ ಫಲದಿಂದ ಎನಗೆ ಗೋಚರವಾದಿರಿ, ಹಿಂದಣ ಸಂದೇಹ ಸೂತಕ ಹಿಂಗಿತ್ತು. ಎನ್ನ ಪ್ರಾಣಲಿಂಗವು ನೀವೇ ಆಗಿ, ಎನ್ನ ಸರ್ವಾಂಗಲಿಂಗದಲ್ಲಿ ಸನ್ನಿಹಿತವಾಗಿ, ಎನ್ನ ಚಿಂತೆಯ ನಿಶ್ಚಿಂತೆಯ ಮಾಡಾ ಕೂಡಲಸಂಗಮದೇವ ಪ್ರಭುವೆ.
--------------
ಬಸವಣ್ಣ
ಪೃಥಿವ್ಯಪ್ತೇಜೋವಾಯ್ವಾಕಾಶಂಗಳಲ್ಲಿ ಪೃಥಿವ್ಯಪ್ತೇಜಸ್ಸುಗಳು ಸಾಕರಾಗಳೂ ವಾಯ್ವಾಕಾಶಂಗಳು ನಿರಾಕಾರಗಳೂ ಆಗಿ, ಸ್ಥೂಲ ಸೂಕ್ಷ್ಮಕಾರಣಂಗಳಾಗಿಹವು. ಪೃಥ್ವಿಯಲ್ಲೈದು ಗುಣಗಳೂ ಜಲದಲ್ಲಿ ನಾಲ್ಕು ಗುಣಗಳೂ ಅಗ್ನಿಯಲ್ಲಿ ಮೂರು ಗುಣಗಳೂ ವಾಯುವಿನಲ್ಲಿರಡು ಗುಣಗಳೂ ಇರ್ಪವು. ಆಕಾಶದಲ್ಲೊಂದು ಗುಣವಿರ್ಪುದು. ಆತ್ಮನು ನಿರ್ಗುಣಮಾಗಿ ಸಕಲಗುಣಂಗಳಿಗೂ ತಾನು ಕಾರಣಮಾಗಿಹನು. ಅದೆಂತೆಂದೊಡೆ : ನಿರ್ಗುಣಮಾದ ಬಿಂದುಪದಾರ್ಥವು ಸಗುಣರೂಪಮಾದ ಮನುಷ್ಯರಿಗೆ ತಾನು ಕಾರಣಮಾಗಿರ್ಪಂದದಿ ಆತ್ಮನಿಹನು. ಪಂಚವರ್ಣಂಗಳು ಸತ್ವರಜಸ್ತಮೋಗುಣಂಗಳು. ನಾದ ಬಿಂದು ಕಲೆಗಳು ಬಾಲ್ಯ ಯೌವನ ಕೌಮಾರ ವಾರ್ಧಕ್ಯಂಗಳು. ಇವೆಲ್ಲವೂ ಪ್ರಪಂಚಕ್ಕೆ ಗುಣಂಗಳಲ್ಲದೆ ಆತ್ಮನ ಗುಣವಲ್ಲ. ಅಂತಪ್ಪ ಆತ್ಮನೇ ಶಿವನು, ಆಕಾಶವೇ ವಿಷ್ಣು, ವಾಯುವೇ ಬ್ರಹ್ಮನು. ಸಾಕಾರದಲ್ಲಿ ಅಗ್ನಿಯೇ ರುದ್ರನು, ಜಲವೇ ವಿಷ್ಣು. ಪೃಥ್ವಿಯೇ ಬ್ರಹ್ಮನು. ಇವು ಒಂದಕ್ಕೊಂದು ಸೃಷ್ಟಿ ಸ್ಥಿತಿ ಸಂಹಾರಹೇತುಗಳಾಗಿ, ಎಲ್ಲವೂ ಆತ್ಮನಲ್ಲಿ ಲಯವನೈದುತ್ತಿಹವು. ಅಂತಪ್ಪ ಆತ್ಮಸ್ವರೂಪಮೆತೆಂದೊಡೆ : ದೃಷ್ಟಿಗೋಚರಮಲ್ಲ, ಒಂದು ವಸ್ತುವಿನಲ್ಲಿ ಸಾಮ್ಯಗೋಚರಮಲ್ಲ. ಅದೆಂತೆಂದೊಡೆ : ವಾಯ್ವಾಕಾಶಾತ್ಮಸ್ವರೂಪಿಗಳಾದ ತ್ರಿಮೂರ್ತಿಗಳು. ವಾಯುರೂಪಮಾದ ಬ್ರಹ್ಮನೇ ಲಕ್ಷ್ಮಿಯು, ಆಕಾಶರೂಪಮಾದ ವಿಷ್ಣುವೇ ಮಹಾದೇವಿಯು, ಆv್ಮÀರೂಪಮಾದ ಶಿವನೇ ಶಾರದೆಯು. ವಾಯುರೂಪಮಾದ ಬ್ರಹ್ಮನು ಆತ್ಮರೂಪಮಾದ ಶಾರದೆಯನ್ನು ಕೂಡಿಹನು. ಆಕಾಶರೂಪಮಾದ ವಿಷ್ಣುವು ವಾಯುರೂಪಮಾದ ಲಕ್ಷ್ಮಿಯಂ ಕೂಡಿಹನು. ಆತ್ಮÀರೂಪಮಾದ ಶಿವನು ಆಕಾಶರೂಪಮಾದ ಮಹಾದೇವಿಯಂ ಕೂಡಿಹನು. ಆತ್ಮನೇ ವಿವೇಕವೆಂದು ತಿಳಿವುದು, ವಿವೇಕವೇ ಸತ್ಯಜ್ಞಾನಾಂದಸ್ವರೂಪು, ವಿವೇಕದಿಂದ ಸಕಲಪ್ರಪಂಚವೆಲ್ಲಾ ಮಿಥ್ಯೆಯಾಗಿಹುದು. ಅಂತಪ್ಪ ಸಕಲಪ್ರಪಂಚಮೆಲ್ಲವೂ ಮಿಥ್ಯವೆಂದು ತಿಳಿದು ಆ ಪ್ರಪಂಚದಲ್ಲಿ ಹೊಂದಿರ್ಪ ವಿವೇಕವೇ ಮುಕ್ತಿಯು, ಆಮುಕ್ತಿಯೇ ಶಿವನು. ಅಂತಪ್ಪ ವಿವೇಕದಲ್ಲಿನಾಹಂಭಾವವಡಗಿ, ಅಂತಪ್ಪ ವಿವೇಕವೇ ಮಹಾಲಿಂಗವು, ಅಂತಪ್ಪ ವಿವೇಕಮಿರ್ದಲ್ಲಿ ಪಾಪಗಳು ಹೊಂದದೇ ಇಹವು. ಅದುಕಾರಣ, ತಾನು ತಾನಾಗಿರ್ಪ ನಿಜಾನಂದಸುಖದೊಳೋಲಾಡುತಿರ್ಪಂತೆ ಮಾಡಾ ಮಹಾಘನ ದೊಡ್ಡದೇಶಿಕಾರ್ಯಗುರುಪ್ರಭುವೆ.
--------------
ಮುಮ್ಮಡಿ ಕಾರ್ಯೇಂದ್ರ /ಮುಮ್ಮಡಿ ಕಾರ್ಯ ಕ್ಷಿತೀಂದ್ರ
ಪ್ರಾಣ ಲಿಂಗಕ್ಕೆ ಆಗಿ, ಲಿಂಗ ಪ್ರಾಣಕ್ಕೆ ಆಗಿ, ಆಚಾರ ಅನುಭಾವ ದ್ವಿವಿಧ ಸನುಮತವಾಗಿ, ತನು ಪ್ರಸಾದಕ್ಕೆಯಾಗಿ ಪ್ರಸಾದ ತನುವಿಂಗಾಗಿ, ಶರೀರಪ್ರೇಮದಿಂ ಸರ್ವಾಂಗ (ಲಿಂಗ) ನೋಡಾ. ಬಂದುದೆ ಓಗರ ನಿಂದುದೆ ಪ್ರಸಾದ. ಅಲ್ಲಿ ನಿತ್ಯನಿರಂತರ ಸಾವಧಾನಿ ಕೂಡಲಚೆನ್ನಸಂಗಾ ನಿಮ್ಮ ಶರಣ.
--------------
ಚನ್ನಬಸವಣ್ಣ
ಪ್ರಸಾದವೆಂದು ನುಡಿವಿರಿ, ಪ್ರಸಾದದ ಭೇದವ ಬಲ್ಲವರಾರು, ಈ ಪ್ರಸಾದದ ಭೇದವ ತಿಳಿದವರಾರು. ಪ್ರಸಾದವೆಂಬ ಮೂರಕ್ಷರದ ಭೇದವ ಬಲ್ಲವರಾರು. ಆಕಾರ ನಿರಾಕಾರ ಸಾಕಾರ ಈ ಮೂರು ಪ್ರಕಾರವಾಯಿತ್ತು. ಈ 'ಪ್ರ'ಕಾರದ ಭೇದವ ಬಲ್ಲವರಾರು. ಸಕಲ ನಿಃಕಲ ನಿರಂಜನನಾದ ಭೇದವ ಬಲ್ಲರೆ 'ಸಾ'ಕಾರದ ಭೇದವ ಬಲ್ಲವರೆ, 'ದ'ಕಾರದ ಭೇದವನರಿದವರೆ, ಆದಿ ಆಧಾರ ಅನಾದಿ ಈ ತ್ರಿವಿಧವ ಬಲ್ಲವರು. ಇಂತೀ ಪ್ರಸಾದವೆಂಬ ಸದ್ಭಾವದ ನಿರ್ಣಯವನರಿಯದೆ ಪ್ರಸಾದವ ಕೊಟ್ಟಾತನು ಕೊಂಡಾತನು ಇವರಿಬ್ಬರ ಭೇದವೆಂತೆಂದರೆ: ಹುಟ್ಟುಗುರಡನ ಕೈಯ ತೊಟ್ಟಿಗುರುಡ ಹಿಡದಂತಾಯಿತು. ಈ ಭೇದವೆಂತೆಂದರೆ :ಇಷ್ಟ ಪ್ರಾಣ ಭಾವ 'ಪ್ರ'ಕಾರವಾಯಿತು. 'ಸಾ'ಕಾರವೆ ಜಂಗಮಲಿಂಗ ಪ್ರಸಾದಲಿಂಗ ಸೋಂಕಿ ನವಪೀಠಗಳಾಗಿ ನವಲಿಂಗ ಸೋಂಕಿ ನವಪೀಠ ಪ್ರಸಾದವಾಯಿತು. ನವಪ್ರಸಾದ ನವಪ್ರಣಮವೆ ನವಬೀಜವಾಯಿತು. ನವಹಸ್ತಗಳ ನೆಲೆಗೊಳಿಸಿ ಶಿವಲಿಂಗಧಾರಣಮಂ ಮಾಡಿ ನವಲಿಂಗಮುಖವನರಿದು ನವನೈವೇದ್ಯವಂ ಮಾಡಿ ನವಮುಖಕ್ಕಿತ್ತ ನವಪ್ರಸಾದಿಯಾದ ಶರಣನು ನವಚಕ್ರಗಳೆಲ್ಲ ನವಜಪ ಪ್ರಸಾದವೆ ತಾನೆ ಆಗಿ ನವರತ್ನಪ್ರಭೆ ಏಕರವಿರಶ್ಮಿಯಾದಂತೆ, ನವಕೋಟಿ ಸೋಮಸೂರ್ಯರ ಪ್ರಭೆ ಒಂದಾಗಿ ದಿವ್ಯಜ್ಯೋತಿರ್ಲಿಂಗ ತಾನಾದ ಶರಣನು. ಅರಿವೆ ಶಿವಲಿಂಗ, ಸತ್ತುಚಿತ್ತಾನಂದ ನಿತ್ಯಪರಿಪೂರ್ಣ ತಾನೆ ಆಯಿತು. ನವ ಅಸ್ಥಿಗಳಡಗಿ ನವಲಿಂಗ ಒಂದೆ ಅಂಗವಾಗಿ ಬೆಳಗುತಿಹ ಶರಣಂಗೆ ಇಹಲೋಕವೇನು, ಪರಾತ್ಪರಲೋಕವೇನು ? ಸಗುಣವೇನು ನಿರ್ಗುಣವೇನು ? ನಿರಂಜನವೇನು, ನಿಷ್ಕಳವೇನು, ನಿರ್ಮಾಯವೇನು ? ಆತಂಗೆ ಭಕ್ಷವಿಲ್ಲ ಅಭ್ಯಕ್ಷವಿಲ್ಲ ಅರ್ಪಿತವಿಲ್ಲ ಅನರ್ಪಿತವಿಲ್ಲ. ಆತ ರುಚಿಸಿದ್ದೆಲ್ಲ ಪ್ರಸಾದ, ಅತ ಸೋಂಕಿದ್ದೇ ಪಾವನ. ಆತ ಮೆಟ್ಟಿದ ಭೂಮಿಯೆಲ್ಲ ಪುಣ್ಯಕ್ಷೇತ್ರಂಗಳಾದವು. ಆತ ಜಲಮಲವ ಬಿಟ್ಟು ಬಂದ, ಸಂಚಮನವ ಮಾಡಿದ ಸ್ಥಾನಾದಿಗಳೆಲ್ಲ ಪುಣ್ಯತೀರ್ಥಂಗಳಾದವು. ಇಂತೀ ನಿಮ್ಮ ಶರಣನ ಸರ್ವಾಂಗವೆಲ್ಲ ಶಿವಮಂದಿರವು ಚೆನ್ನಯ್ಯಪ್ರಿಯ ನಿರ್ಮಾಯಪ್ರಭುವೆ.
--------------
ಚೆನ್ನಯ್ಯ
ಹಿಂದನರಿಯದೆ, ಮುಂದನರಿಯದೆ, ಈಗನರಿಯದೆ, ಆಗಿ ಬಂದವರೆಂದು ಅರಿದು ಮರೆದು ಹರಿದು ಮಾಡುವ ಕುರಿಗಳಿಗೆತ್ತಣ ದೇವತ್ವವಯ್ಯಾ! ಬರಿಯ ಭ್ರಾಂತಿಗಳಿಗೆತ್ತಣ ಭಕ್ತತ್ವವಯ್ಯಾ! ಮಾಡಲರಿಯದೆ ಮಾಡುವರು, ನೀಡಲರಿಯದೆ ನೀಡುವರು. ಬೇಡಿ ಉಣಲರಿಯದೆ ಬೇಡಿ ಉಂಬುವ ನಾಡಮಾನವರ ನಡೆನುಡಿಗತ್ತತ್ತಲಾಗಿರ್ದ ನಮ್ಮ ಗುರುನಿರಂಜನ ಚನ್ನಬಸವಲಿಂಗ.
--------------
ದೇಶಿಕೇಂದ್ರ ಸಂಗನಬಸವಯ್ಯ
ಧರಣಿಜರೆಲ್ಲರೂ ಭಕ್ತರೇ ಆಗಿ, ಪಾಷಾಣಂಗಳೆಲ್ಲವೂ ಲಿಂಗಂಗಳಾಗಿ, ಆದಿ ಸೂತಕವೇದ್ಯನು ಭಕ್ತನು; ವಿರಕ್ತನು, ಮುಕ್ತನೆಂದೆನಿಸುವ, ತ್ರಿವಿಧ ಸೂತಕವ ಕಳೆದುಳಿದಲ್ಲದೆ ಕೂಡಲಚೆನ್ನಸಂಗನ ಹೊದ್ದಬಾರದು.
--------------
ಚನ್ನಬಸವಣ್ಣ
ಕಾಯಜೀವದ ಕೀಲವನರಿದು ಜನನ ಮರಣಂಗಳಾಯಾಸವಳಿದು ಅಂಗಲಿಂಗದೊಳಗೇಕಾರ್ಥವ ಮಾಡುವ ಭೇದವೆಂತೆಂದಡೆ : ಪಂಚಭೂತಂಗಳ ಪೂರ್ವಾಶ್ರಯವನಳಿದು ಪಂಚಕರಣಂಗಳ ಹಂಚುಹರಿಮಾಡಿ, ಕರ್ಮಬುದ್ಧೀಂದ್ರಿಯಂಗಳ ಮರ್ದಿಸಿ, ದಶವಾಯುಗಳ ಹಸಗೆಡಿಸಿ ಕರಣಚತುಷ್ಟಯಂಗಳ ಕಾಲಮುರಿದು ಪಂಚವಿಂಶತಿ ತತ್ತ್ವಂಗಳ ವಂಚನೆಯನಳಿದು ಹತ್ತುನಾಡಿಗಳ ವ್ಯಕ್ತೀಕರಿಸಿ ಅಷ್ಟತನು ಅಷ್ಟಾತ್ಮಂಗಳ ನಷ್ಟಮಾಡಿ ಅಂತರಂಗದ ಅಷ್ಟಮದಂಗಳ ಸಂತರಿಸಿ, ಬಹಿರಂಗದ ಅಷ್ಟಮಂದಗಳ ಬಾಯಟೊಣೆದು, ಅಷ್ಟಮೂರ್ತಿಮದಂಗಳ ಹಿಟ್ಟುಗುಟ್ಟಿ ಸಪ್ತಧಾತು ಸಪ್ತವ್ಯಸನಂಗಳ ಸಣ್ಣಿಸಿ ಷಡೂರ್ಮೆ ಷಡ್‍ವರ್ಗಂಗಳ ಕೆಡೆಮೆಟ್ಟಿ ಷಡ್‍ಭ್ರಮೆ ಷಡ್‍ಭಾವವಿಕಾರಂಗಳ ಗಂಟಸಡಲಿಸಿ, ಪಂಚಕೋಶ ಪಂಚಕ್ಲೇಶಂಗಳ ಪರಿಹರಿಸಿ ಅಂಗಚತುಷ್ಟಯಂಗಳ ಶೃಂಗಾರವಳಿದು ಗುಣತ್ರಯಂಗಳ ಗೂಡಮುಚ್ಚಿ ಅಹಂಕಾರತ್ರಯಂಗಳ ಶಂಕೆಗೊಳಗುಮಾಡಿ ತಾಪತ್ರಯಂಗಳ ತಲ್ಣಣಗೊಳಿಸಿ ತನುತ್ರಯಂಗಳ ತರಹರಮಾಡಿ ಜೀವತ್ರಯಂಗಳ ಜೀರ್ಣೀಕರಿಸಿ, ಆತ್ಮತ್ರಯಂಗಳ ಧಾತುಗೆಡಿಸಿ, ಅವಸ್ಥಾತ್ರಯಂಗಳ ಅವಗುಣವಳಿದು, ತ್ರಿದೋಷಂಗಳ ಪಲ್ಲಟಗೊಳಿಸಿ, ಭಾವತ್ರಯಂಗಳ ಬಣ್ಣಗೆಡಿಸಿ , ದುರ್ಭಾವತ್ರಯಂಗಳ ದೂರಮಾಡಿ, ಮನತ್ರಯಂಗಳ ಮರ್ದನಮಾಡಿ, ತ್ರಿಕರಣಂಗಳ ಛಿದ್ರಗೊಳಿಸಿ, ಪಂಚಾಗ್ನಿಗಳ ಸಂಚಲವನತಿಗಳೆದು, ಇಂತೀ ಅಂಗ ಪ್ರಕೃತಿಗುಣಂಗಳೆಲ್ಲ ನಷ್ಟವಾಗಿ ಸರ್ವಾಂಗದಲ್ಲಿ ಸರ್ವಾಚಾರ ನೆಲೆಗೊಂಡು ಬಹಿರಂಗದ ಮೇಲಿದ್ದ ಇಷ್ಟಲಿಂಗದಲ್ಲಿ ನೈಷಿ*ಕಭಾವಂಬುಗೊಂಡು, ಅನಿಮಿಷದೃಷ್ಟಿ ಅಚಲಿತವಾಗಿ ಭಾವಬಲಿದಿರಲು, ಆ ಲಿಂಗವು ಅಂತರಂಗಕ್ಕೆ ವೇಧಿಸಿ ಪ್ರಾಣಲಿಂಗವೆನಿಸಿಕೊಂಡು ಷಡಾಧಾರಚಕ್ರಂಗಳಲ್ಲಿ ಷಡ್‍ವಿಧ ಲಿಂಗವಾಗಿ ನೆಲೆಗೊಂಬುದು. ಆ ಷಡ್‍ವಿಧ ಲಿಂಗಕ್ಕೆ ಷಡಿಂದ್ರಿಯಗಳನೆ ಷಡ್‍ವಿಧಮುಖಂಗಳೆನಿಸಿ, ಆ ಷಡ್‍ವಿಧ ಮುಖಂಗಳಿಗೆ ಷಡ್‍ವಿಧವಿಷಯಂಗಳನೆ ಷಡ್‍ವಿಧ ದ್ರವ್ಯಪದಾರ್ಥವೆನಿಸಿ, ಆ ಪದಾರ್ಥಂಗಳು ಷಡ್‍ವಿಧಲಿಂಗಕ್ಕೆ ಷಡ್‍ವಿಧ ಭಕ್ತಿಯಿಂದೆ ಸಮರ್ಪಿತವಾಗಲು, ಅಂಗವೆಂಬ ಕುರುಹು ಅಡಗಿ ಒಳಹೊರಗೆಲ್ಲ ಮಹಾಘನಲಿಂಗದ ದಿವ್ಯಪ್ರಕಾಶವೆ ತುಂಬಿ ತೊಳಗಿ ಬೆಳಗುತ್ತಿರ್ಪುದು. ಇಂತಪ್ಪ ಘನಲಿಂಗದ ಬೆಳಗನೊಳಗೊಂಡಿರ್ಪ ಚಿದಂಗವೆ ಚಿತ್‍ಪಿಂಡವೆನಿಸಿತ್ತು. ಇಂತಪ್ಪ ಅತಿಸೂಕ್ಷ್ಮವಾದ ಚಿತ್‍ಪಿಂಡದ ವಿಸ್ತಾರವನು ಚಿದ್‍ಬ್ರಹ್ಮಾಂಡದಲ್ಲಿ ವೇಧಿಸಿ ಕಂಡು, ಆ ಚಿದ್‍ಬ್ರಹ್ಮಾಂಡದ ಅತಿಬಾಹುಲ್ಯವನು ಆ ಚಿತ್‍ಪಿಂಡದಲ್ಲಿ ವೇಧಿಸಿ ಕಂಡು, `ಪಿಂಡಬ್ರಹ್ಮಾಂಡಯೋರೈಕ್ಯಂ' ಎಂಬ ಶ್ರುತಿ ಪ್ರಮಾಣದಿಂದ ಆ ಪಿಂಡಬ್ರಹ್ಮಾಂಡಗಳು ಒಂದೇ ಎಂದು ಕಂಡು, ಆ ಪಿಂಡಬ್ರಹ್ಮಾಂಡಂಗಳಿಗೆ ತಾನೇ ಆಧಾರವೆಂದು ತಿಳಿದು ಆ ಪಿಂಡಬ್ರಹ್ಮಾಂಡಗಳ ತನ್ನ ಮನದ ಕೊನೆಯಲ್ಲಿ ಅಡಗಿಸಿ, ಆ ಮನವ ಭಾವದ ಕೊನೆಯಲ್ಲಿ ಅಡಗಿಸಿ, ಆ ಭಾವವ ಜ್ಞಾನದ ಕೊನೆಯಲ್ಲಿ ಅಡಗಿಸಿ, ಆ ಜ್ಞಾನವ ಮಹಾಜ್ಞಾನದಲ್ಲಿ ಅಡಗಿಸಿ, ಆ ಮಹಾಜ್ಞಾನವನು ಪರಾತ್ಪರವಾದ ಪರಿಪೂರ್ಣ ಬ್ರಹ್ಮದಲ್ಲಿ ಅಡಗಿಸಿ, ಆ ಪರಬ್ರಹ್ಮವೆ ತಾನಾದ ಶರಣಂಗೆ ದೇಹಭಾವವಿಲ್ಲ. ಆ ದೇಹಭಾವವಿಲ್ಲವಾಗಿ ಜೀವಭಾವವಿಲ್ಲ. ಆ ಜೀವಭಾವವಿಲ್ಲವಾಗಿ ಫಲಪದಂಗಳ ಹಂಗಿಲ್ಲ. ಫಲಪದದ ಹಂಗಿಲ್ಲವಾಗಿ ಭವಬಂಧನಂಗಳು ಮುನ್ನವೆ ಇಲ್ಲ. ಭವಬಂಧನಂಗಳು ಇಲ್ಲವಾಗಿ, ಆ ಶರಣನು ತಾನು ಎಂತಿರ್ದಂತೆ ಪರಬ್ರಹ್ಮವೆ ಆಗಿ ಆತನ ಹೃದಯಾಕಾಶವು ಬಚ್ಚಬರಿಯ ಬಯಲನೈದಿಪ್ಪುದು. ಇದು ಕಾರಣ, ಆ ಶರಣನು ದೇಹವಿದ್ದು ಸುಟ್ಟಸರವಿಯಂತೆ ನಿರ್ದೇಹಿಯಾದ ಕಾರಣ ಉಪಮಾತೀತ ವಾಙ್ಮನಕ್ಕಗೋಚರನಾಗಿರ್ಪನಯ್ಯಾ ಅಖಂಡೇಶ್ವರಾ.
--------------
ಷಣ್ಮುಖಸ್ವಾಮಿ
ಅರಿಯದೆ ಆಗಿ ಬಂದವರೆನಲಾಗದು, ಆದವರಿಗೆ ಮನಬಾಧೆಯುಂಟೆ ? ಅದೇಕೆಂದಡೆ, ಶರಣುಹಾಕಿ ಬಂದಲ್ಲಿ ನಿರ್ಮಳ ಮಾತನಾಡುವರು. ಹಾಕದೆ ಬಂದು ಮಾತನಿಟ್ಟರೆ ಪೂರ್ವದ ಹಗೆಭಾವದುಲುವ ತೋರುವರು. ಕೊಡಲಿಲ್ಲ ಕೊಳ್ಳಲಿಲ್ಲ ತುಡುಗುಣಿತನದ ಬಡಿವಾರವ ನೋಡಾ. ಇಂತಲ್ಲ ಶರಣ, ಲೋಕರವಿಯಂತಿಪ್ಪ ಗುರುನಿರಂಜನ ಚನ್ನಬಸವಲಿಂಗಾ ನೀ ಸನ್ನಿಹಿತ.
--------------
ದೇಶಿಕೇಂದ್ರ ಸಂಗನಬಸವಯ್ಯ
ಪೃಥ್ವಿಯೇ ಶೂದ್ರನು, ಜಲವೇ ವೈಶ್ಯನು, ಅಗ್ನಿಯೇ ಕ್ಷತ್ರಿಯನು, ವಾಯುವೇ ಬ್ರಾಹ್ಮಣನು. ಸ್ಥೂಲಶರೀರವೇ ಶೂದ್ರನು, ಸೂಕ್ಷ್ಮಶರೀರವೇ ವೈಶ್ಯನು, ಕಾರಣಶರೀವೇ ಕ್ಷತ್ರಿಯನು, ಜೀವನೇ ಬ್ರಾಹ್ಮಣನು. ಬ್ರಾಹ್ಮಣರಿಗೆ ಋಗ್ವೇದವು, ಕ್ಷತ್ರಿಯರಿಗೆ ಯಜುರ್ವೇದವು, ವೈಶ್ಯರಿಗೆ ಸಾಮವೇದವು, ಶೂದ್ರರಿಗೆ ಅಥರ್ವಣವೇದವು. ಶೂದ್ರರಿಗೆ ಧರ್ಮವು, ವೈಶ್ಯರಿಗೆ ಅರ್ಥವು, ಕ್ಷತ್ರಿಯರಿಗೆ ಕಾಮವು, ಬ್ರಾಹ್ಮಣರಿಗೆ ಮೋಕ್ಷವು, ಬ್ರಾಹಣರಿಗೆ ಪೀತವರ್ಣವು, ಕ್ಷತ್ರಿಯರಿಗೆ ಅರುಣವರ್ಣವು, ವೈಶ್ಯರಿಗೆ ಶ್ಯಾಮವರ್ಣವು, ಶೂದ್ರರಿಗೆ ನೀಲವರ್ಣವು. ಬ್ರಾಹ್ಮಣರಿಗೆ ಸಾಮವು, ಕ್ಷತ್ರಿಯರಿಗೆ ಭೇದವು, ವೈಶ್ಯರಿಗೆ ದಾನವು, ಶೂದ್ರರಿಗೆ ದಂಡವು, ಬ್ರಾಹ್ಮಣರಿಗೆ ಇಂದ್ರನಧಿದೇವತೆಯು, ಕ್ಷತ್ರಿಯರಿಗೆ ಕಾಲನಧಿದೇವತೆಯು, ಶೂದ್ರರು ಭಕ್ತರನ್ನೂ, ವೈಶ್ಯರು ಗುರುವನ್ನೂ, ಕ್ಷತ್ರಿಯರು ಲಿಂಗವನ್ನೂ, ಬ್ರಾಹ್ಮಣರು ಅತಿಥಿಗಳನ್ನೂ ಪೂಜಿಸಬೇಕು. ಶಿವಭಕ್ತನೇ ಬ್ರಾಹ್ಮಣನು, ವಿಷ್ಣುಭಕ್ತನೇ ಕ್ಷತ್ರಿಯನು, ನಿಜವಸ್ತುವು ಉತ್ಕøಷ್ಟತ್ವವಂ ಹೊಂದಿದಲ್ಲಿ ಶ್ರೇಷ*ವಪ್ಪುದು; ಉತ್ಕøಷ್ಟ ವಸ್ತುವು ನಿಜವಂ ಹೊಂದಿದಲ್ಲಿ ಅದೇ ಪರತತ್ವವು. ಇಂತಪ್ಪ ಜಾತಿಧರ್ಮಂಗಳನ್ನು ತನ್ನಲ್ಲಿ ತಾನೇ ತಿಳಿದು ಭಕ್ತನಾಗಿ, ಶೂದ್ರತ್ವಮಂ ಕಳೆದು ಮಾಹೇಶ್ವರನಾಗಿ, ವೈಶ್ಯತ್ವಮಂ ಕಳೆದು ಪ್ರಸಾದಿಯಾದಿ, ಕ್ಷತ್ರಿಯತ್ವಮಂ ಕಳೆದು ಪ್ರಾಣಲಿಂಗಿಯಾಗಿ, ಬ್ರಹ್ಮತ್ವಮಂ ಪಡೆದು ಅಜಾತಮಾಗಿ, ಆಕಾಶರೂಪಮಾಗಿ, ಶುದ್ಧಸ್ಫಟಿಕಸಂಕಾಶಮಪ್ಪ. ಪ್ರಸಾದಲಿಂಗದಲ್ಲಿ ಪರಿಣಾಮಿಸುತ್ತಾ. ಲಿಂಗವೇ ಪತಿ ತಾನೇ ಸತಿಯಾಗಿರ್ಪನೇ ಶರಣನು. ಈ ಸತಿಪತಿನ್ಯಾವಳಿದು ವರ್ಣಾತೀತನೂ ವಾಗತೀತನೂ ಆಗಿ, ತಾನುತಾನಾಗಿರ್ಪುದೇ ಐಕ್ಯವು. ಇಂತಪ್ಪ ಕೇವಲನಿರ್ವಾಣಲಿಂಗೈಕ್ಯಪದವೆನಗೆ ಸಾಧ್ಯಮಪ್ಪಂತೆ ಮಾಡಾ ಮಹಾಘನ ದೊಡ್ಡದೇಶಿಕಾರ್ಯಗುರುಪ್ರಭುವೆ.
--------------
ಮುಮ್ಮಡಿ ಕಾರ್ಯೇಂದ್ರ /ಮುಮ್ಮಡಿ ಕಾರ್ಯ ಕ್ಷಿತೀಂದ್ರ
ಆ ಪರಬ್ರಹ್ಮವೆ ಓಂಕಾರವಪ್ಪ ಪ್ರಣವಸ್ವರೂಪು, ಪರಮಾತ್ಮನೆನಿಸಿ ಪರಶಿವನಾಮದಿಂ ಪರಶಕ್ತಿಸಂಯುಕ್ತವಾಗಿ, ಆಕಾರ ಉಕಾರ ಮಕಾರವೆಂಬ ಬೀಜಾಕ್ಷರಂಗಳಿಂ ನಾದಬಿಂದುಕಳೆಯಾಗಿ, ದಶನಾಡಿ ದಶವಾಯು ದಶವಿಧೇಂದ್ರಿಯ ಸಪ್ತಧಾತು ಷಡುಚಕ್ರ ಷಡುವರ್ಗ ಪಂಚಭೂತ ಚತುರಂತಃಕರಣ, ತ್ರಿದೋಷಪ್ರಕೃತಿ, ತ್ರಯಾವಸ್ಥೆ, ಸತ್ವ ರಜ ತಮ, ಅಂಗ ಪ್ರಾಣ, ಅರಿವು ಭಾವ ಜ್ಞಾನ, ಮೊದಲಾದ ಬಾಹತ್ತರ ವಿನಿಯೋಗಮಂ ತಿಳಿದು ಭೂಲೋಕ ಭುವರ್ಲೋಕ ಸ್ವರ್ಲೋಕ ಮಹರ್ಲೋಕ ಜನಲೋಕ ತಪೋಲೋಕ, ಸತ್ಯಲೋಕ, ಅತಳ, ವಿತಳ, ಸುತಳ, ಮಹಾತಳ, ರಸಾತಳ, ತಳಾತಳ, ಪಾತಾಳಂಗಳೊಳಗಾದ ಚತುರ್ದಶಭುವನಂಗಳೊಳಹೊರಗೆ ಅಂತರ್ಗತ ಬಹಿರ್ಗತವಾಗಿ, ನಾದಮಂ ತೋರಿ ಭರ್ಗೋದೇವನೆಂಬ ನಾಮಮಂ ತಳೆದು ಊಧ್ರ್ವರೇತುವೆನಿಸಿ, ವಿಶ್ವತೋಮುಖ, ವಿಶ್ವತಶ್ಚಕ್ಷು, ವಿಶ್ವತೋ ಬಾಹು, ವಿಶ್ವತಃಪಾದದಿಂ ವಿಶ್ವಗರ್ಭೀಕೃತವಾಗಿ, ಉತ್ಪತ್ತ್ಯಸ್ಥಿತಿಲಯಂಗಳನೆಣಿಕೆಗೆಯ್ಯದೆ ದೇವತಾಂತರದಿಂ ಮಾನಸಾಂತರವನನುಕರಿಸಿ, ಮಾನಸದಲ್ಲಿ ರವಿಕೋಟಿತೇಜದಿಂ ಸಕಲಪಾಪಾಂಧಕೂಪಮಂ ತೊಳೆದು ಸುರಕ್ಷಿತದಿಂ ಪ[ರಾ] ಪಶ್ಯಂತಿ ಸುಮಧ್ಯ ವೈಖರಿಯೆಂಬ ಚತುರ್ವಿಧದಿಂ ದುರಿತ ದುರ್ಮದ ಕಾಲಮೂಲಾದಿಮೂಲಮಂ ಬಗೆಗೊಳ್ಳದೆ, ಚಿತ್ಸುಧಾಮೃತವೆ ಅಂಗವಾಗಿ ಚಿದರ್ಕಪ್ರಭಾಕರವೆ ಪ್ರಾಣವಾಗಿ, ಸೌರಾಷ್ಟ್ರ ಸೋಮೇಶ್ವರನಿಂತಿಂತು ಕರ್ತನು-ಭರ್ತನು ತಾನೆ ಆಗಿ, ಪರಮಸ್ವಯಂಭೂ ಸ್ವತಃಸಿದ್ಧದಿಂ ಸಚ್ಚಿದಾನಂದಸ್ವರೂಪದಿಂ ನಿತ್ಯಪರಿಪೂರ್ಣತ್ವದಿಂದೆಡದೆರಹಿಲ್ಲದಿರ್ಪನಯ್ಯಾ.
--------------
ಆದಯ್ಯ
ದಕ್ಷಿಣದಲ್ಲಿರ್ಪ ಯಮನೇ ವಿಷ್ಣುವು; ಉತ್ತರದಲ್ಲಿರ್ಪ ಕುಬೇರನೇ ಲಕ್ಷ್ಮಿಯು. ಪಶ್ಚಿಮದಲ್ಲಿರ್ಪ ವರುಣನೇ ವಿಷ್ಣುವು; ಪೂರ್ವದಲ್ಲಿರ್ಪ ಇಂದ್ರನೇ ಲಕ್ಷ್ಮಿಯು. ಈಶಾನ್ಯದಲ್ಲಿರ್ಪ ಈಶಾನನೇ ಶಿವನು; ನೈರುತ್ಯದಲ್ಲಿರ್ಪ ನೈರುತಿಯೇ ಶಕ್ತಿಯು. ಅಗ್ನೇಯಲ್ಲಿರ್ಪ ಅಗ್ನಿಯೇ ಶಿವನು; ವಾಯುವ್ಯದಲ್ಲಿರ್ಪ ವಾಯುವೇ ಶಕ್ತಿಯು. ಇವು ನಿಜನಾಮಸಂಬಂಧಗಳಾಗಿಹವು. ಅವು ಭಿನ್ನನಾಮಸಂಬಂಧಗಳಾಗಿ ಸಾಕಾರ ನಿರಾಕಾರಮೂರ್ತಿಗಳಾಗಿಹವು. ಶಿವನು ಸಾಕಾರದಲ್ಲಿ ಸಂಹರಿಸಿ, ನಿರಾಕಾರದಲ್ಲಿ ರಕ್ಷಿಸುತ್ತಿಹನು. ವಿಷ್ಣವು ಸಾಕಾರದಲ್ಲಿ ರಕ್ಷಿಸಿ, ನಿರಾಕಾರದಲ್ಲಿ ಸಂಹರಿಸುತ್ತಿಹನು. ಕೆಳಗೆ, ಬಿಂದುಮುಖದಲ್ಲಿ ಸೃಷ್ಟಿಸುವನೇ ಬ್ರಹ್ಮನು, ಮೇಲೆ, ನಾದ ಮುಖದಲ್ಲಿ ಸೃಷ್ಟಿಸುತ್ತಿರ್ಪಳೇ ಸರಸ್ವತಿಯು. ಅಷ್ಟದಳಕಮಲದ ಮೂಲವೇ ಬ್ರಹ್ಮನು, ಅದರಗ್ರದಲ್ಲಿ ತೋರುವ ವಾಸನೆಯು ಸರಸ್ವತಿಯು. ಆ ಕಮಲದ ಹೃದಯವೇ ಮೇರುವು, ಆ ಮೇರುಮಧ್ಯದಲ್ಲಿರ್ಪುದೇ ಮಹಾಲಿಂಗವು. ಅಲ್ಲಿರ್ಪ ಮಹಾಲಿಂಗವಂ ಗುರುವು ಬಾಹ್ಯಕ್ಕೆ ತಂದಿದಿರಿಟ್ಟಲ್ಲಿ, ಸ್ಫಟಿಕಭಾಂಡದಲ್ಲೊಳಗಿರ್ಪ ವಸ್ತುವೇ ಹೊರಗೆ, ಹೊರಗಿರ್ಪ ವಸ್ತುವೇ ಒಳಗೆ ತೋರಿ, ಆ ಭಾಂಡವು ತನ್ನ ನಿಜಗುಣವನಳಿದು ವಸ್ತುವು ಗುಣರೂಪಮಾಗಿ ತೋರ್ಪಂದದಿ, ಇಷ್ಟ ಪ್ರಾಣಗಳೇಕಮಾದಲ್ಲಿ, ಶರೀರವು ತನ್ನ ಮುನ್ನಿನ ಗುಣವನಳಿದು, ಅಗ್ನಿಸ್ವರೂಪಮಾದಿಷ್ಟಲಿಂಗದಲ್ಲಿ ಐಕ್ಯವಾದುದರಿಂ ದಹನಕ್ಕಯೋಗ್ಯಮಾಯಿತ್ತು. ನಿರಾಕಾರವಾದ ಪ್ರಾಣವು ಈಶಾನ್ಯಸ್ವರೂಪಮಾದ ಪ್ರಾಣಲಿಂಗದಲ್ಲಿ ಲೀನಮಾದುದರಿಂ ಕರ್ಮಸಂಸ್ಕಾರಯೋಗ್ಯಮಲ್ಲಮಾಯಿತ್ತು. ಆದುದರಿಂದಾ ಶಿವಭಕ್ತನಿಗೆ ದಹನಸಂಸ್ಕಾರಮಿಲ್ಲಮಾಯಿತ್ತು. ಇಂತಪ್ಪ ಸಾಕಾರ ನಿರಾಕಾರ ಶಿವಶಕ್ತಿಸ್ವರೂಪಗಳೆಲ್ಲವೂ ಭಾವದಲ್ಲೊಂದೇ ಆಗಿ ಪರಿಪೂರ್ಣತೃಪ್ತಿಯಲ್ಲಿ ನಿಜಸ್ವಭಾವನಾಯಿತ್ತು ಕಾಣಾ ಮಹಾಘನ ದೊಡ್ಡದೇಶಿಕಾರ್ಯಗುರುಪ್ರಭುವೆ.
--------------
ಮುಮ್ಮಡಿ ಕಾರ್ಯೇಂದ್ರ /ಮುಮ್ಮಡಿ ಕಾರ್ಯ ಕ್ಷಿತೀಂದ್ರ
ಕತ್ತಲೆಯ ಕಾನನ ಇತ್ತರದ ಮಧ್ಯದ ಸುತ್ತಿಪ್ಪುದದು ಅಖಿಲಲೋಕಕಾಗಿ. ಬೇರು ನಾಶವು ಆಗಿ, ದೀಪ್ತಿ ಅತಿ ಪ್ರಜ್ವಲ್ಯ ಮೂಲಾಧಾರಕ್ಕೆ ಮುನ್ನ ಬಸವಣ್ಣನು, ಬಸವಣ್ಣನ ಕರುಣ ಸದಮಲಜ್ಞಾನಕ್ಕೆ ದೆಸೆ ನಾನು ಆದೆನೈ ಕಪಿಲಸಿದ್ಧಮಲ್ಲಿಕಾರ್ಜುನ.
--------------
ಸಿದ್ಧರಾಮೇಶ್ವರ
ಇನ್ನಷ್ಟು ... -->