ಅಥವಾ

ಒಟ್ಟು 41 ಕಡೆಗಳಲ್ಲಿ , 22 ವಚನಕಾರರು , 37 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಹುಟ್ಟಿತ್ತಲ್ಲಾ ಉಂಟೆನಿಸಿತ್ತಲ್ಲಾ. ಕರುವಿಟ್ಟಿತ್ತಲ್ಲಾ ರೂಪಾಯಿತ್ತಲ್ಲಾ. ನೋಡ ನೋಡ ವಾಯುಗುಂದಿತ್ತಲ್ಲಾ. ನೋಡ ನೋಡ ಭಾವಗುಂದಿತ್ತಲ್ಲಾ. ಅರಿವು ವಿಕಾರದಲ್ಲಿ ಆಯಿತ್ತು, ಹೋಯಿತ್ತು, ಮಹಾಲಿಂಗ ತ್ರಿಪುರಾಂತಕಾ, ನಿಮಗೆರಗದ ತನು.
--------------
ಕಿನ್ನರಿ ಬ್ರಹ್ಮಯ್ಯ
ಕೆಟ್ಟ ಒಡವೆಯನರಸ ಹೋಗಿ, ಆ ಕೆಟ್ಟ ಒಡವೆಯ ಕಂಡ ಬಳಿಕ, ಆರನೂ ಕೇಳಲಿಲ್ಲ ಹೇಳಲಿಲ್ಲ, ಅದು ಮುನ್ನಲಿದ್ದ ಹಾಂಗೆ ಆಯಿತ್ತು. ಅಂತು ಶರಣನು ಆ ಪರಿಯಲೆ ತನ್ನ ಸ್ವಯಾನುಭಾವದಿಂದ ತನ್ನ ನಿಜವ ತಾ ಕಂಡು ಸೈವೆರಗಾಗಿರಲು, ಅದನ್ನು ಅಜ್ಞಾನಿಗಳು ಬಲ್ಲರೆ ಗುಹೇಶ್ವರಾ ?
--------------
ಅಲ್ಲಮಪ್ರಭುದೇವರು
ತುದಿ ಮೊದಲಾಯಿತ್ತು. ಮೊದಲೇ ತುದಿಯಾಯಿತ್ತು. ತುದಿ ಮೊದಲೆಂಬವೆರಡಿಲ್ಲದೆ ಹೋಯಿತ್ತು. ಮುನ್ನೆಂತಿದ್ದುದಂತೆ ಆಯಿತ್ತು. ಸಹಜದ ನಿಲವು ಉದಯಸಿತ್ತು. ನಿಜಗುರು ಸ್ವತಂತ್ರಸಿದ್ಧಲಿಂಗೇಶ್ವರಾ, ನಿಮ್ಮ ಶರಣಂಗೆ.
--------------
ಸ್ವತಂತ್ರ ಸಿದ್ಧಲಿಂಗ
ನಾದದಿಂದಾದ ಸಂಗ ವಿನೋದಸಂಗ, ಬಿಂದುವಿನಿಂದಾದ ಸಂಗ ಬದ್ಧಕ್ರಿ. ದ್ವಯ, ಅದ್ವಯದಿಂದಾದ ಸಂಗ ಪರಿಭಾವ. ಗಮಿಸುವುದೆ ನಿರವಯವು, ಬಯಸದಿರಾ ! ಬೇರೆ ಮತ್ತಿಲ್ಲ, ಅನುಭಾವವೆಂಬ ಘನಮಹಿಮೆಯ ನೆಮ್ಮಿತ್ತೆ ಆಯಿತ್ತು; ಆ ನಾದದ ನಿಶ್ಚಿಂತನಿಲವನರಿಯಿತ್ತೆ ಆಯಿತ್ತು. ಇದು ನಿಮ್ಮ ಕಲ್ಪನೆ, ಆದಿ ಅಂತ್ಯವ ಬಲ್ಲಡೆ, ಬಲ್ಲನು. ಅವಚಿತ್ತದ ಅವಧಾನದ, ಅಹುದೆಂಬ ಅಲ್ಲವೆಂಬ, ಉಂಟೆಂಬ ಇಲ್ಲವೆಂಬ ಈ ಎರಡರ ಮಥನವಲ್ಲ ಕೇಳಿರಯ್ಯಾ. ಚೆಂದಗೆಡದ ಮುನ್ನ ಬೇಗಮಾಡಿ ತಿಳಿದಿರಾದಡೆ ಬಸವನಂತೆ ಭಾವ, ಬಸವನಂತೆ ಮನ, ಬಸವನ ಪದವಿಡಿದಡೆ ಇದೇ ಪಥ ಕಾಣಾ ಕೂಡಲಚೆನ್ನಸಂಗಮದೇವಾ
--------------
ಚನ್ನಬಸವಣ್ಣ
ಮೋರೆಯಿಲ್ಲದವರಿಗೆ ಕನ್ನಡಿಯ ತೋರಿದಂತೆ, ಕಿವಿಯಿಲ್ಲದ ಕಿವುಡಗೆ ಶಾಸ್ತ್ರವ ಹೇಳುವಂತೆ, ಮೂಗಿಲ್ಲದ ಮೂಕಂಗೆ ಮಾತು ಹೇಳುವಂತೆ, ಬಾಯಿ ಇಲ್ಲದವರಿಗೆ ಪಂಚಾಮೃತವನುಣಿಸಿದಂತೆ, ಒಲ್ಲದ ಕೂಸಿಗೆ ನೊರೆವಾಲನೆರೆದಂತೆ, ಕನ್ಯಾಕುಮಾರಿಯ ಸಂಗ ನಪುಂಸಕ ಮಾಡುವಂತೆ, ಇಂತೀ ದೃಷ್ಟಾಂತದಂತೆ ತ್ರಿವಿಧಮಲವ ಕಚ್ಚಿ, ಸಂಸಾರವಿಷಯಲಂಪಟರಾದ ತಾಮಸಜೀವಿಗಳಿಗೆ ಶಿವಾನುಭವಬೋಧೆಯ ಮಾಡಿದುದು ಒಂದೇ ನೋಡಾ. ಅಂತಪ್ಪ ಮಂಗಮೂಳರ ಮುಂದೆ ಮಾತನಾಡಲಾಗದು. ಮನದೆರದು ಮಹಾನುಭಾವಬೋಧೆಯ ಬೆಸಗೊಳ್ಳಲಾಗದು. ತಥಾಪಿ ಬಿಡೆಯಭಾವದಿಂ ಶಿವಾನುಭಾವ ಬೆಸಗೊಂಡಡೆ ಹಳ್ಳಗೊಂಡ ಹರವಿಯ ನೀರು ತುಂಬಿ ಇರಿಸಿದಂತೆ, ಹೊಳ್ಳ ಕುಟ್ಟಿ ಗಾಳಿಗೆ ತೂರಿದಂತೆ ಆಯಿತ್ತು. ಇದು ಕಾರಣ ಶಬ್ದಮುಗ್ಧನಾಗಿ ಕಲ್ಲುಮರದಂತೆ, ಪರ್ಣ ಉದುರಿದ ವೃಕ್ಷದಂತೆ, ಸುಮ್ಮನೆ ಇರ್ದನು ಕಾಣಾ ನಿಮ್ಮ ಶರಣ ಕಾಡನೊಳಗಾದ ಶಂಕರಪ್ರಿಯ ಚನ್ನಕದಂಬಲಿಂಗ ನಿರ್ಮಾಯಪ್ರಭುವೆ.
--------------
ಕಾಡಸಿದ್ಧೇಶ್ವರ
ಎಲೆ ದೇವಾ, ಒಂದು ಹೋಗಿ ಎರಡಾದುದು, ಎರಡು ಹೋಗಿ ಮೂರಾದುದು, ಮೂವತ್ತಾರಾಗಿ ಮೂರರಲ್ಲಿ ಆಡಿದುದು; ಆಡಿ ಆಡಿ ಅದೆ ಲಿಂಗವಾಯಿತ್ತು. ನಮ್ಮ ಗುರು ಚೆನ್ನಬಸವಣ್ಣನೊಂದು ಕೊಟ್ಟ್ಲ ಎಲ್ಲಾ ಒಂದೆ ಆಯಿತ್ತು, ಕಪಿಲಸಿದ್ಧಮಲ್ಲಿಕಾರ್ಜುನಾ.
--------------
ಸಿದ್ಧರಾಮೇಶ್ವರ
ಪರಶಕ್ತಿ ಅದಿಯೈಯ್ದ ಬೆರೆಸಿ ಬೆರೆಯದೆ ಬ್ರಹ್ಮವನರಿದೆನೆಂಬ ಯೋಗಿ ಕೇಳಾ. ಅದು ಸಗುಣದಲ್ಲಿ ತಾತ್ಪರ್ಯ ಅದು ನಿಷ್ಕಳದಲ್ಲಿ ನಿತ್ಯ ಅರಿದೆನೆಂಬ ಯೋಗಿ ಕೇಳಾ. ಅದು ಅನಾಹತದಲ್ಲಿ ಆನಂದ, ಅದು ಭಕ್ತಿಜ್ಞಾನವೈರಾಗ್ಯವಂ ಕೂಡಿದ ಏಕಮತ ಅದು ಪದ ನಾಲ್ಕು ಮೀರಿದ ಮಹಾಮತ. ಅದು ಉಂಡುದನುಣ್ಣದು, ಅದು ಬಂದಲ್ಲಿ ಬಾರದು, ಅದು ಸಕಳದಲ್ಲಿಯೂ ತಾನೆ ನಿಷ್ಕಳದಲ್ಲಿಯೂ ತಾನೆ, ಅದು ಪ್ರಾಪಂಚಿಕದಲ್ಲಿಯೂ ತಾನೆ, ಅದು ತಾತ್ಪರ್ಯದಲ್ಲಿಯೂ ತಾನೆ. ಅದು ಸಕಲ ಸರ್ವದ ನಿಷ್ಕಳದ ನಿರ್ಮಳದ ಮದದ ಮಾತ್ಸರ್ಯದ ಬಣ್ಣ ಹಲವರಿದ ಅತಿಗಳೆದ ಪರಮಸೀಮೆಯ ಅರಿದೆನೆಂಬ ಯೋಗಿ. ಅದು ಒಂದರಲ್ಲಿ ನಿತ್ಯ, ಎರಡರಲ್ಲಿ ತಾತ್ಪರ್ಯ, ಮೂರರಲ್ಲಿ ಮುಕ್ತ, ನಾಲ್ಕರಲ್ಲಿ ಕ್ರೋದ್ಥಿ, ಐದರಲ್ಲಿ ಆನಂದ, ಆರರಲ್ಲಿ ತಾನೆ, ಇಪ್ಪತ್ತೈದು ಪಟ್ಟಣದ ತಾತ್ಪರ್ಯಂಗಳನ್ನರಿತು ಮೂವತ್ತಾರು ವೃಕ್ಷಂಗಳ ಮೇಲೆ ಹಣ್ಣೊಂದೆ ಆಯಿತ್ತು ಕಾಣಾ. ಆ ಹಣ್ಣು ಹಣಿತು, ತೊಟ್ಟುಬಿಟ್ಟು ನಿರ್ಮಳ ಜ್ಞಾನಾಮೃತಂ ತುಂಬಿ ಭೂಮಿಯ ಮೇಲೆ ಬಿದ್ದಿತು. ಆ ಬಿದ್ದ ಭೂಮಿ ಪರಲೋಕ. ಆ ಹಣ್ಣ ಗುರು ಕರುಣವುಳ್ಳವಂಗಲ್ಲದೆ ಮೆಲಲಿಲ್ಲ. ದೀಕ್ಷತ್ರಯದಲ್ಲಿ ಅನುಮಿಷನಾದಂಗಲ್ಲದೆ ಆ ಲೋಕದಲ್ಲಿರಲಿಲ್ಲ. ಆ ಲೋಕದಲ್ಲಿದ್ದವಂಗೆ ಅಜಲೋಕದ ಅಮೃತವನು ನಿತ್ಯವು ಸೇವಿಸಿ ಸತ್ಯಮುಕ್ತನಾಗಿ ಬೇಡಿದವಕ್ಕೆ ಬೇಡಿದ ಪರಿಯ ಕೇವಲವನಿತ್ತು ತಾನು ಕಾಂಕ್ಷೆಗೆ ಹೊರಗಾಗಿ ಕಾಲನ ಕಮ್ಮಟಕ್ಕೆ ಕಳವಣ್ಣವಾಗಿ ನಿತ್ಯಸಂಗಮಕ್ಕೆ ಸಂಯೋಗವಾಗಿ ಕಪಿಲಸಿದ್ಧ ಮ್ಲಕಾರ್ಜುನಯ್ಯನೆಂಬ ಅನಾಹತ ಮೂಲಗುರುವಾಗಿ, ಎನ್ನನಿಷ್ಟಕ್ಕೆ ಪ್ರಾಪ್ತಿಸಿದನಯ್ಯಾ.
--------------
ಸಿದ್ಧರಾಮೇಶ್ವರ
ಬೀಜವಿಲ್ಲದೆ ವೃಕ್ಷ ಬೆಳೆಯಬಲ್ಲುದೆ ? ಹೂವಿಲ್ಲದೆ ಹಣ್ಣಾಗಬಲ್ಲುದೆ ? ತೆಂಗಿನ ಮರನ ಬಿತ್ತಿದಡೆ ಅಂಬರಕ್ಕೆ ಹೋಯಿತ್ತು; ಕಾಯಿಲ್ಲದೆ, ನೀರು ಇಲ್ಲದೆ ಗಾಳಿಗೆ ಮರ ಮುರಿದಂತೆ ಆಯಿತ್ತು ಕಾಣಾ. ಅಮುಗೇಶ್ವರಲಿಂಗವನರಿಯದ ಅನಾಚಾರಿಗಳ ವಿರಕ್ತರೆಂಬೆನೆ ? ಎನಲಾಗದು.
--------------
ಅಮುಗೆ ರಾಯಮ್ಮ
ಪೂರ್ವವನಳಿದು ಪುನರ್ಜಾತನಾದೆನೆಂದು ಪೆಸರಿಟ್ಟುಕೊಂಡು ನುಡಿವ ಅಣ್ಣಗಳಿರಾ, ನಿಮ್ಮ ಅಂಗ, ಆ ಈಶ್ವರದೇವರು ಹುಟ್ಟಿಸಿದ ಮೂರೂವರೆ ಮೊಳದ ಸ್ಥೂಲಕಾಯವಾಗಿ ಜೀಕಿತ್ತು. ಬ್ರಹ್ಮಕಲ್ಪನೆಯ ಮಾನವನು ಜಾಜಿಯನಾಗಿಸಿ ಮರುವಾದೆ ಮನುಜರ ಕೈಯಲ್ಲಿ ಅನ್ನ ಉಣ್ಣದೆ, ಅಂಗಿಯ ಕೊಳ್ಳದೆ, ಸ್ವರ್ಗ-ಮತ್ರ್ಯ-ಪಾತಾಳ ಇವು ಮೂರು ಲೋಕವನು ಬಿಟ್ಟು, ಬೇರೊಂದು ಸ್ಥಳದಲ್ಲಿ ಇರಬಲ್ಲರೆ, ಆತನಿಗೆ ಪೂರ್ವವನಳಿದ ಮನುಜೋತ್ತಮನೆಂದೆನ್ನಬಹುದು ಕಾಣಿರೋ. ನಿಮ್ಮ ಅಂಗದ ಈಶ್ವರದೇವರು ಹುಟ್ಟಿಸಿದ ಮೂರುವರೆ ಮೊಳದ ಸ್ಥೂಲಕಾಯವನು ಮುಂದಿಟ್ಟುಕೊಂಡು ಹಲವು ಜಾತಿಗಳ ನೆಲೆಯನರಿಯದೆ, ಮನೆ ಮನೆಯಲ್ಲಿ ಕಾಡಿ ಬೇಡಿ ಉಂಬುವ ಪಾಷಂಡಿಗಳ ದೀಕ್ಷೆಯನು ಮಾಡಿಕೊಂಡು, ಕಾವಿಯರಿವೆಯನ್ಹೊದ್ದುಕೊಂಡು ನಾನು ಪೂರ್ವವನಳಿದು ಪುನರ್ಜಾತನಾದೆನೆಂದು ಪೂಜೆಗೊಂಬುವ ಜಾತಿಶ್ರೇಷ* ಅಜ್ಞಾನಿಗಳಿಗೆ ಜಾತಿಸೂತಕ ಉಳಿಯಿತೆ ? ಸುಜ್ಞಾನಿಗಳು ಹೋಗಿ ಅವರಿಗೆ ಶರಣಂ ಕೊಟ್ಟರೆ, ಅವರಾ ಮನೆಯಲ್ಲಿ ಅನ್ನವನುಂಡರೆ, ಅಗ್ನಿಯ ಕಂಡರೆ, ಮೊದಲೆ ತಾವೇ ಭೋಗಿಸಿ ಮೇಲೆ ಮಲಮೂತ್ರವ ಭುಂಜಿಸಿದಂತೆ ಆಯಿತ್ತು ಎಂದಾತ ಸಿದ್ಧಮಲ್ಲನದಾತ ಮೇಗಣಗವಿಯ ಗುರುಶಿವಸಿದ್ಧೇಶ್ವರಪ್ರಭುವೆ.
--------------
ಸಿದ್ಧಮಲ್ಲಪ್ಪ
ಬಣ್ಣವನಿಟ್ಟು ಮೆರೆವ ಅಣ್ಣನ ಭಕ್ತಿ ಸುಣ್ಣದ ಕಲ್ಲ ಕಟ್ಟಿ ಮಡುವ ಬಿದ್ದಂತೆ ಆಯಿತ್ತು. ತನ್ನ [ಬಣ್ಣ ತನ್ನ ಸು]ಡುವುದು, ತನ್ನ ಸುಡದ ಹಾಗೆ ನೆನೆಯಾ, ಕೂಡಲಸಂಗಮದೇವನ.
--------------
ಬಸವಣ್ಣ
ಊರೆಲ್ಲರೂ ಕೂಡಿಕೊಂಡು ತಿಂದರು ದನವ. ಆ ಖಂಡವನೊಲ್ಲದೆ ಕಾಲ ಕೊಳಗು ತಲೆಯ ಕೊಂಬು ಬೇಯಿಸಿ ತಿಂಬ ಶರಣ. ತಿಂಬ ಕೊಂಬು ಕೊಳಗು ಅವನಂಗವ ನುಂಗಿತ್ತು. ಅಂಗ ಸುಸಂಗ ಲೀಯವಾಯಿತ್ತು. ಲೀಯ ನಿಜದಲ್ಲಿ ನಿಂದು ನಿರ್ಲೇಪವಾಯಿತ್ತು. ಆ ಗುಣವೇತರಿಂದ ಆಯಿತ್ತು ಎಂಬುದನರಿ ನಿನ್ನ ನೀ, ಪುಣ್ಯಾರಣ್ಯದಹನ ಭೀಮೇಶ್ವರಲಿಂಗ ನಿರಂಗಸಂಗ.
--------------
ಕೋಲ ಶಾಂತಯ್ಯ
ನಾನೊಬ್ಬನುಂಟೆಂಬವಂಗೆ ನೀನೊಬ್ಬನುಂಟಾಗಿ ತೋರುವೆ. ನಾನು ನೀನೆಂಬುದುಂಟಾದಲ್ಲಿ ಜ್ಞಾನ ಅಜ್ಞಾನವುಂಟಾಯಿತ್ತು. ಜ್ಞಾನ ಅಜ್ಞಾನ ಉಂಟಾದಲ್ಲಿಯೆ ನಾನಾವಿಧದ ಪ್ರಪಂಚು ಆಯಿತ್ತು ನೋಡಾ. ಮಾಯಿಕವೆಂಬುದು ಹೀಂಗಲ್ಲದೆ ಇನ್ನು ಹೇಂಗಿಹುದು ಹೇಳಾ?, ನಾನು ನೀನೆಂಬುದೆರಡು ಸತ್ತರೆ ಜ್ಞಾನ ಅಜ್ಞಾನವರತಿತ್ತು. ನಾನಾವಿಧವಾಗಿ ತೋರಿದ ಮಾಯಿಕವಳಿಯಿತ್ತು. ಮಾಯಿಕವಳಿಯಿತ್ತಾಗಿ ನಿರ್ಮಾಯನಾದೆನು ಕಾಣಾ. ನಿರ್ಮಾಯನಾದ ನಿಜಶರಣಂಗೆ ಕಾಯವೆಲ್ಲಿಯದು? ಮಾಯವೆಲ್ಲಿಯದು? ಮನವೆಲ್ಲಿಯದು? ನೆನಹೆಲ್ಲಿಯದು? ಅರುಹೆಲ್ಲಿಯದು? ಕುರುಹೆಲ್ಲಿಯದು. ತಾನಷ್ಟವಾದ ಸರ್ವನಷ್ಟಂಗೆ ತನಗನ್ಯವಾಗಿ ಇನ್ನೇನು ದೃಷ್ಟವನೂ ಹೇಳಲಿಲ್ಲ. ``ಯದೃಷ್ಟಂ ತನ್ನಷ್ಟಂ' ಎಂದುದಾಗಿ, ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೆಂಬ ಲಿಂಗವು ನಿರಾಳವಾಗಿ, ಇನ್ನೇನು ಎಂಬ ನುಡಿಗೆಡೆಯಿಲ್ಲ ಕಾಣಿರೋ.
--------------
ತೋಂಟದ ಸಿದ್ಧಲಿಂಗ ಶಿವಯೋಗಿಗಳು
ಆಗಮ ನಿಗಮ ಶಾಸ್ತ್ರ ಪುರಾಣವೆಂಬ ಅಂಧಕನ ಕೈಗೆ ಕೋಲಕೊಟ್ಟು ನಡೆಸಿಕೊಂಡು ಹೋಗುವಾಗ, ತನ್ನ ಕಣ್ಣುಗೆಟ್ಟಡೆ ಮುಂದಕ್ಕೆ ಗಮನವಿಲ್ಲ. ಹಿಂದಕ್ಕೆ ತಿರುಗಲರಿಯದೆ, ಎರಡಕ್ಕೆ ಕೆಟ್ಟ ಜಂಬುಕನಂತೆ ಆಯಿತ್ತು ನೋಡಾ. ಸಜ್ಜನ ಗಂಡನ ಕದ್ದು, ಕಳ್ಳನ ಹಿಂದೆ ಹೋದ ಸತಿಯಂತೆ ಆದರಲ್ಲಾ. ಸಂತೆಯಲ್ಲಿ ಗುಡಿಸಲನಿಕ್ಕಿ ಹಡೆದುಂಬ ಸೂಳೆಯಂತೆ, ಮನವೆ ಸೂಳೆಯಾಗಿ, ಮಾತಿನ ಮಾಲೆಯ ಸರವನಿಕ್ಕಿಕೊಂಡು, ವಾಚಾಳಿಗತನದಿಂದ ಒಡಲ ಹೊರೆವವರೆಲ್ಲರೂ ಶರಣರಪ್ಪರೆ ? ಅಲ್ಲಲ್ಲ. ಅದೆಂತೆಂದಡೆ: ತನು ಕರಗಿ, ಮನ ಪುಳಕವಾದ ಮಹಾಮಹಿಮರಿಗಲ್ಲದೆ ಉಚ್ಚಿಯ ಬಚ್ಚಲಲ್ಲಿ ಓಲಾಡುವ ತೂತಜ್ಞಾನಿಗಳಿಗೆಂತಪ್ಪದು ಹೇಳಾ ? ಕಾಲಾಳು ಆಕಾಶವನಡರಿಹೆನೆಂಬ ಪರಿಯೆಂತೊ ? ಬ್ರಹ್ಮಪುರ ವೈಕುಂಠ ರುದ್ರಪುರ ಅಷ್ಟಾದಿ ಕೈಲಾಸವೆಂಬ ಈ ಪಂಚಗ್ರಾಮಂಗಳ ವರ್ಮ ಕರ್ಮವಳಿದ ಮಹಾದೇವಂಗಲ್ಲದೆ ಮುಂದಕ್ಕೆ ಅಡಿಯಿಡಬಾರದು. ಪಿಪೀಲಿಕ ಕಪಿಯ ಮತವೆಂಬ ಪಥ ಮೀರಿ, ವಿಹಂಗವೆಂಬ ವಾಹನಮಂ ಏರಿ, ಬ್ರಹ್ಮಾಂಡಕ್ಕೆ ದಾಳಿ ಮಾಡಿ, ಸುವರ್ಣಪುರಮಂ ಸುಟ್ಟು ಸೂರೆಗೊಂಡ ಮಹಾನುಭಾವಿಗಳ ತೋರಿ ಬದುಕಿಸಾ. ನಿಜಗುರು ಭೋಗೇಶ್ವರಾ, ನಾ ನಿಮ್ಮ ಧರ್ಮವ ಬೇಡಿಕೊಂಬೆ.
--------------
ಭೋಗಣ್ಣ
ನಿಃಕಳ ನಿರುಪಮ ತೇಜೋಮಯ ನಿರಂಜನಲಿಂಗದ ನೆನಹಿನ ಮಹಾಘನ ಮಹತ್ವವನುಳ್ಳ ಮಹಾಂತ ಅಖಂಡಪರಶಿವನೊಳಗೆ ಷಡ್‍ವಕ್ತ್ರವನುಳ್ಳ ಪರಬ್ರಹ್ಮವಿರ್ಪುದು, ಆ ಪರಬ್ರಹ್ಮದಲ್ಲಿ ಬ್ರಹ್ಮಾಂಡವಿರ್ಪುದು, ಆ ಬ್ರಹ್ಮಾಂಡದೊಳಗೆ ಸಕಲ ಸ್ಥಿರಚರಪ್ರಾಣಿಗಳಿರ್ಪುವು. ಆ ಪ್ರಾಣಿಗಳ ಸತ್ಕರ್ಮ ದುಷ್ಕರ್ಮದಿಂದಾದ ಪುಣ್ಯ ಪಾಪಂಗಳಿಂದೆ ಬಂದ ಸುಖದುಃಖಂಗಳನುಂಡು ಸೃಷ್ಟಿ ಸ್ಥಿತಿ ಲಯಕ್ಕೊಳಗಾಗಿ ಅನಂತಕಾಲ ಎಂಬತ್ತುನಾಲ್ಕುಲಕ್ಷ ಜೀವರಾಶಿಯೋನಿಯಲ್ಲಿ ಬರುತಿರ್ಪುದು. ಆ ಬರುವದರೊಳಗೆ ಸತ್ಕರ್ಮದಿಂದ ಪುಣ್ಯವೊದಗಿ ಮಾನವಜನ್ಮ ಬರಲು ಈ ಮಾನವಜನ್ಮದ ಅಜ್ಞಾನಕ್ಕೆ ಆ ಮಹಾಮಹಾಂತ ಪರಿಮಳವನೊಳಕೊಂಡು ಮಹಾಂತಮಾರುತ ಸುಳಿಯಲು ಆ ಮಾರುತನ ಸೋಂಕಿಗೆ ಆ ಅಜ್ಞಾನ ಸುಜ್ಞಾನವಾಯಿತ್ತು. ಆ ಸುಜ್ಞಾನದಿಂದೆ ಸತ್ಕರ್ಮವ ಮಾಡಲು ಸಾಧುರಸಂಗವು ದೊರಕಿತ್ತು. ಆ ಸಾಧುರಸಂಗದಿಂದ ಸುಗುಣ ಅಳವಟ್ಟಿತ್ತು. ಆ ಸುಗುಣ ಅಳವಟ್ಟಲ್ಲಿ ಸಂಸಾರ ಹೇಯವಾಯಿತ್ತು. ಆ ಸಂಸಾರ ಹೇಯವಾದಲ್ಲಿ ಮುಕ್ತನಾಗಬೇಕೆಂಬೋ ಚಿಂತೆ ತಲೆದೋರಿತ್ತು. ಆ ಚಿಂತಾಪರವಶದಿಂದೆ ದುಃಖಗೊಂಡಿರಲು ಆ ಮಹಾಂತಪರಿಮಳವನೊಳಕೊಂಡು, ಮಹಾಂತಮಾರುತನೆಂಬ ಪ್ರಭುವೇ ತಾ ಮುನ್ನ ಸೋಂಕಿದ್ದಕ್ಕೆ ತನ್ನ ಬಯಸುವ ಶಿಷ್ಯನಲ್ಲಿಗೆ ತಾನೇ ಗುರುವಾಗಿ ಬಂದು, ಮೋಕ್ಷವಾಸನಿಗೆ ಅವಸ್ಥೆಯೊಳಗಿದ್ದ ಶಿಷ್ಯನ ಸಂತೈಸಿ, ಮಹಾಂತಪರಿಮಳವನುಳ್ಳ ಮುಕ್ತಿಫಲವಾಗುವ ಘನವೆಂಬ ಪುಷ್ಪಕ್ಕೆ ಮೂಲನೆನವಾದ ಮನವೆಂಬ ಲಿಂಗದಲ್ಲಿ ನಿಃಕಲವೇ ನಾನು, ನಾನೇ ನೀನು. ಹೀಗೆಂಬುವುದ ಉಸುರದೆ ಮರೆಗೈದು, ಆ ಲಿಂಗಮಂ ಪರಿಪೂರ್ಣವಾದ ಕರಕಮಲಕ್ಕೆ ಕೊಟ್ಟು ಮನವೆಂಬ ಲಿಂಗದ ನೆನವೆಂಬ ಬಳ್ಳಿಯೇ ಜಂಗಮವೆಂದು ತೋರಿ, ಆ ಬಳ್ಳಿಯ ಬೊಡ್ಡಿಯ ತಂಪು ಪಾದೋದಕವು. ಆ ಆನಂದ ತಂಪ್ಹಿಡಿಯುವುದಕ್ಕೆ ಮಡಿಯಾದ ಮೃತ್ತಿಕೆಯು ನಿರಂಜನಪ್ರಸಾದ. ಆ ಮೃತ್ತಿಕೆಗೆ ಒಡ್ಡಾದ ತೇಜೋಮಯವೇ ವಿಭೂತಿ, ಆ ತೇಜಸ್ಸು ಲಿಂಗಪೂಜೆಯೇ ರುದ್ರಾಕ್ಷಿ, ಆ ತೇಜಸ್ಸು ಲಿಂಗಸ್ಫುಟನಾದವೇ ನಿರುಪಮಮಂತ್ರ, ಇಂತೀ ಅಷ್ಟಾವರಣ ಘಟ್ಟಿಗೊಂಡು ಪೂಜಿಸಲಾಗಿ ಆ ಶಿಷ್ಯನು ಗುರುವ ಹಾಡಿ, ಲಿಂಗವ ನೋಡಿ, ಜಂಗಮವ ಪೂಜಿಸಿ, ಪಾದೋದಕವನ್ನುಪಾರ್ಜಿಸಿ, ಪ್ರಸಾದವನುಂಡು, ವಿಭೂತಿಯ ಲೇಪಿಸಿಕೊಂಡು, ರುದ್ರಾಕ್ಷಿಯ ಧರಿಸಿಕೊಂಡು, ಮಂತ್ರವ ಚಿತ್ತದೊಳಿರಿಸಿ ಆಚರಿಸಲು, ಆ ಶಿಷ್ಯನ ಕಾಯ ಆ ಗುರುವನಪ್ಪಿ ಸದ್ಗುರುವಾಯಿತ್ತು. ಮನವು ಲಿಂಗವ ಕೂಡಿ ಘನಲಿಂಗವಾಯಿತ್ತು. ಪ್ರಾಣ ಜಂಗಮವ ಮರೆಗೊಂಡು ನಿಜಜಂಗಮವಾಯಿತ್ತು. ತೃಷೆ ಪಾದೋದಕದಲ್ಲಿ ಮುಳುಗಿ ಆನಂದಪಾದೋದಕವಾಯಿತ್ತು. ಹಸಿವು ಪ್ರಸಾದದಲ್ಲಡಗಿ ಪ್ರಸಿದ್ಧಪ್ರಸಾದವಾಯಿತ್ತು. ಚಂದನ ವಿಭೂತಿಯಲ್ಲಿ ಸತ್ತು ಚಿದ್ವಿಭೂತಿಯಾಯಿತ್ತು. ಶೃಂಗಾರ ರುದ್ರಾಕ್ಷಿಯಲ್ಲಿ ಕರಗಿ ಏಕಮುಖರುದ್ರಾಕ್ಷಿಯಾಯಿತ್ತು. ಚಿತ್ತ ಮಂತ್ರದಲ್ಲಿ ಸಮರಸವಾಗಿ ಮೂಲಮಂತ್ರವಾಯಿತ್ತು. ಇಂಥಾ ಮೂಲಮಂತ್ರವೇ ಬ್ರಹ್ಮಾಂಡ, ಪಿಂಡಾಂಡ, ಸ್ಥಿರ, ಚರ, ಸಮಸ್ತಕ್ಕೆ ಕಾರಣ ಚೈತನ್ಯಸೂತ್ರವಾಗಿ ಅಂತರಂಗ ನಿವೇದಿಸಲು, ಅಲ್ಲಿ ಅಂತರಂಗದಲ್ಲಿ ತೋರುವ ಆರುಸ್ಥಲ, ಆರುಚಕ್ರ, ಆರುಶಕ್ತಿ, ಆರುಭಕ್ತಿ, ಆರುಲಿಂಗ, ಆರಾರು ಮೂತ್ತಾರು, ಇನ್ನೂರಾಹದಿನಾರು ತೋರಿಕೆಗೆ ಆ ಮೂಲಮಂತ್ರ ತಾನೇ ಕಾರಣ ಚೈತನ್ಯಸೂತ್ರವಾಗಿ ಕಾಣಿಸಲು ಸಮ್ಯಜ್ಞಾನವೆನಿಸಿತು. ಆ ಸಮ್ಯಜ್ಞಾನಬೆಳಗಿನೊಳಗೆ ಮುದ್ರೆ ಸಂಧಾನ ವಿವರ ವಿಚಾರದಿಂದೆ ಷಟ್ತಾರೆಗಳ ಸ್ವರೂಪದ ಆರುಭೂತ, ಆರುಮುಖ, ಆರುಹಸ್ತ, ಆರುಪ್ರಸಾದ, ಆರುತೃಪ್ತಿ, ಆರು ಅಧಿದೇವತೆ ಮೊದಲಾದ ಆರಾರು ಮೂವತ್ತಾರು ಇನ್ನೂರಾಹದಿನಾರು ಅನಂತ ತೋರಿಕೆಯೆಲ್ಲಾ ಮಂತ್ರಸ್ವರೂಪವೇ ಆಗಿ ತೋರಿದಲ್ಲಿ ತತ್ವಜ್ಞಾನವಾಯಿತು. ಒಳಗೇಕವಾದ ತತ್ವಜ್ಞಾನವು ಹೊರಗೆ ನೋಡಲು ಹೊರಗೇಕವಾಗಿ ತೋರಿತು. ಒಳಹೊರಗೆಂಬಲ್ಲಿ ನಡುವೆಂಬುದೊಂದು ತೋರಿತು. ಈ ಮೂರು ಒಂದೇ ಆಗಿ, ಒಂದೇ ಬ್ಯಾರೆ ಬ್ಯಾರೆ ಸ್ಥೂಲ ಸೂಕ್ಷ್ಮ ಕಾರಣ ಮೂರಾದಲ್ಲಿ ಆತ್ಮಜ್ಞಾನವಾಯಿತು. ಆ ಆತ್ಮಜ್ಞಾನದಿಂದ ಆತ್ಮಾನಾತ್ಮ ವಿಚಾರ ಗಟ್ಟಿಗೊಂಡಲ್ಲಿ ಮಹಾಜ್ಞಾನಪ್ರಕಾಶವಾಯಿತು. ಆ ಮಹಾಜ್ಞಾನದಿಂದೆ ಅನುಭವದ ದೃಷ್ಟಿಯಿಡಲು ಬೊಂಬೆಸೂತ್ರ ಆಡಿಸುವವನಂತೆ ಬ್ಯಾರೆ ಬ್ಯಾರೆ ಕಾಣಿಸಲು ಈ ಬೊಂಬೆಯ ಸೂತ್ರ ಆಡಿಸುವವನು ಇವು ಮೂರು ಎಲ್ಲಿಹವು, ಏನೆಂದು ತೂರ್ಯವೇರಿ ಸೂರೆಗೊಂಡಲ್ಲಿ ಸ್ವಯಂಬ್ರಹ್ಮವೆನಿಸಿತ್ತು. ಆ ಸ್ವಯಂಬ್ರಹ್ಮಜ್ಞಾನವು ತನ್ನ ತಾ ವಿಚಾರಿಸಲು ತನ್ನೊಳಗೆ ಜಗ, ಜಗದೊಳಗೆ ತಾನು, ತಾನೇ ಜಗ, ಜಗವೇ ತಾನೆಂಬಲ್ಲಿ ನಿಜಜ್ಞಾನವಾಯಿತು. ಆ ನಿಜಜ್ಞಾನದಿಂದೆ ನಿಜವರಿಯಲು ಆ ನಿಜದೊಳಗೆ ತಾನೇ ಜಗ, ಜಗದೊಳಗೆ ತಾನೇ ಎಂಬೋ ಎರಡಿಲ್ಲದೆ ತಾನೆ ತಾನೆಂಬೊ ಅರುವಾಯಿತು. ಆ ಅರುವು ಮರೆಗೊಂಡು ಕುರುಹು ಉಲಿಯದೆ ನಿರ್ಬೈಲಾಗಲು ಮಹಾಂತನೆಂಬ ಹೆಸರಿಲ್ಲದೆ ಹೋಗಿ ಏನೋ ಆಯಿತ್ತು ನಿರುಪಮ ನಿರಾಳ ಮಹತ್ಪ್ರಭು ಮಹಾಂತಯೋಗಿ.
--------------
ಮಡಿವಾಳಪ್ಪ / ಕಡಕೋಳ ಮಡಿವಾಳಪ್ಪ
ಪೃಥ್ವಿ ಅಪ್ಪು ತೇಜ ವಾಯು ಆಕಾಶಂಗಳು ತಲೆದೋರುವುದಕ್ಕೆ ಮುನ್ನವೆ, ಯುಗಜುಗಂಗಳು ಪ್ರಮಾಣಿಸುವುದಕ್ಕೆ ಮುನ್ನವೆ, ನಾಲ್ಕು ವೇದ ಹದಿನಾರುಶಾಸ್ತ್ರ ಇಪ್ಪತ್ತೆಂಟು ದಿವ್ಯಪುರಾಣಂಗಳು ಕುರುಹುಗೊಳ್ಳುವುದಕ್ಕೆ ಮುನ್ನವೆ, ನಿರಾಳ ಸುರಾಳವೆಂಬ ಬಯಲು ಅವಗವಿಸುವುದಕ್ಕೆ ಮುನ್ನವೆ, ಬ್ರಹ್ಮಾಂಡವೆಲ್ಲಿ ಆಯಿತ್ತು ? ವಿಷ್ಣುವಿನ ಚೇತನ ಎಲ್ಲಿ ಹುಟ್ಟಿತ್ತು ? ಮಹಾರುದ್ರನ ದ್ವೇಷ ಎಲ್ಲಿ ಹುಟ್ಟಿ, ಎಲ್ಲಿ ಅಡಗಿತ್ತು ಹೇಳಾ ? ನಾದಬಿಂದುಕಳೆಗೆ ಅತೀತವಪ್ಪ ಲಿಂಗವ ಭೇದಿಸಿ ವೇಧಿಸಲರಿಯದೆ, ಭಾವಭ್ರಮೆಯಿಂದ ನಾನಾ ಸಂದೇಹಕ್ಕೆ ಒಳಗಾಗಿ, ಜೀವ ಪರಮನ ನೆಲೆಯ ಕಂಡೆಹೆನೆಂದು ಆವಾವ ಠಾವಿನಲ್ಲಿ ಕರ್ಕಶಗೊಂಬವಂಗೆ, ಪ್ರಾಣಲಿಂಗಿಯೆಂಬ ಭಾವ ಒಂದೂ ಇಲ್ಲ, ನಿಃಕಳಂಕ ಮಲ್ಲಿಕಾರ್ಜುನಾ.
--------------
ಮೋಳಿಗೆ ಮಾರಯ್ಯ
ಇನ್ನಷ್ಟು ... -->