ಅಥವಾ

ಒಟ್ಟು 76 ಕಡೆಗಳಲ್ಲಿ , 31 ವಚನಕಾರರು , 61 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಅಯ್ಯಾ ಆರೂ ಇಲ್ಲದ ಅರಣ್ಯದಲ್ಲಿ, ನಾನಡಿಯಿಟ್ಟು ನಡವುತ್ತಿರ್ದೆನಯ್ಯಾ. ಮುಂದೆ ಬರೆಬರೆ ಮಹಾಸರೋವರವ ಕಂಡೆ. ಸರೋವರದೊಳಗೊಂದು ಹಿರಿಯ ಮೃಗವ ಕಂಡೆ. ಆ ಮೃಗಕ್ಕೆ ಕೊಂಬುಂಟು ತಲೆಯಿಲ್ಲ, ಬಾಯುಂಟು ಕಣ್ಣಿಲ್ಲ, ಕೈಯುಂಟು ಹಸ್ತವಿಲ್ಲ, ಕಾಲುಂಟು ಹೆಜ್ಜೆಯಿಲ್ಲ, ಒಡಲುಂಟು ಪ್ರಾಣವಿಲ್ಲ. ಇದ ಕಂಡು ನಾ ಹೆದರಿ, ಹವ್ವನೆ ಹಾರಿ, ಬೆದರಿ ಬಿದ್ದೆನಯ್ಯಾ. ಆಗೆನ್ನ ಹೆತ್ತತಾಯಿ ಬಂದು ಎತ್ತಿ ಕುಳ್ಳಿರಿಸಿ, ಚಿತ್ತಮೂಲಾಗ್ನಿಯ ಒತ್ತಿ ಉರುಹಿದರೆ, ಇವೆಲ್ಲವು ಸುಟ್ಟು ಬಟ್ಟಬಯಲಾದವು. ಆ ಬಟ್ಟಬಯಲೊಳಗೆ ಅಡಿಯಿಟ್ಟು ನಡೆವಾಗ, ಮುಂದೆ ಇಟ್ಟಡಿಯ ಬಾಗಿಲೊಳಗೆ ಮತ್ತೊಂದು ಮೃಗವ ಕಂಡೆ. ಆ ಮೃಗಕ್ಕೆ ತಲೆಯುಂಟು ಕೊಂಬಿಲ್ಲ, ಕಣ್ಣುಂಟು ಬಾಯಿಲ್ಲ, ಹಸ್ತವುಂಟು ಕೈಯಿಲ್ಲ, ಹೆಜ್ಜೆಯುಂಟು ಕಾಲಿಲ್ಲ, ಪ್ರಾಣವುಂಟು ಒಡಲಿಲ್ಲ. ಇದ ಕಂಡು ನಾ ಅಪ್ಪಿಕೊಳಹೋದಡೆ, ಮುಟ್ಟದ ಮುನ್ನವೆ ಎನ್ನನೆ ನುಂಗಿತ್ತು. ನುಂಗಿದ ಮೃಗ ಮಹಾಲಿಂಗದಲ್ಲಿಯೆ ಅಡಗಿತ್ತು, ಬಸವಪ್ರಿಯ ಕೂಡಲಚೆನ್ನಬಸವಣ್ಣಾ.
--------------
ಹಡಪದ ಅಪ್ಪಣ್ಣ
ಆರೂ ಇಲ್ಲದವಳೆಂದು ಆಳಿಗೊಳಲುಬೇಡ ಕಂಡೆಯಾ ಏನ ಮಾಡಿದಡೂ ಆನಂಜುವಳಲ್ಲ. ತರಗೆಲೆಯ ಮೆಲಿದು ಆನಿಹೆನು, ಸರಿಯ ಮೇಲೊರಗಿ ಆನಿಹೆನು. ಚೆನ್ನಮಲ್ಲಿಕಾರ್ಜುನಯ್ಯಾ, ಕರ ಕೇಡನೊಡ್ಡಿದಡೆ ಒಡಲನು ಪ್ರಾಣವನು ನಿಮಗರ್ಪಿಸಿ ಶುದ್ಧಳಹೆನು.
--------------
ಅಕ್ಕಮಹಾದೇವಿ
ಹೂವಿನ ಮೇಲೊಂದು ಚಿಕ್ಕ ಬೆಟ್ಟ ಹುಟ್ಟಿ, ಬೆಕ್ಕಿನ ಮೇಲಾರು ಬೆಟ್ಟ ಹುಟ್ಟಿದವು. ಬೆಟ್ಟದ ಮೇಲಣವರು ಕಲ್ಲನಿರಿಸಿ ಆರೂ ಕಾಣರು ! ಒಂದು ಗಿರಿ ನೂರನಾಲ್ವತ್ತೆಂಟು ಲಕ್ಷ ಮುಖವು. ನಾನೊಂದು ಮುಖದಲಿ ಇದ್ದೇನೆ ಕಾಣಾ ಗುಹೇಶ್ವರಾ.
--------------
ಅಲ್ಲಮಪ್ರಭುದೇವರು
ಭಕ್ತನಾದಡೆ ಆರೂ ಅರಿಯದಂತೆ ಊರೆಲ್ಲರರಿಕೆಯಾಗಿ, ಗುರುವಿಂಗೆ ತನು, ಲಿಂಗಕ್ಕೆ ಮನ, ಜಂಗಮಕ್ಕೆ ಧನ, ಮಾಟವನರಿತು ಮಾಡುವ ಸತಿಯರ ಗಂಡ ನಾನು. ರಕ್ಕಸನೊಡೆಯ ಕೊಟ್ಟುದ ಬೇಡ
--------------
ರಕ್ಕಸಬೊಮ್ಮಿತಂದೆ / ರಕ್ಕಸ ಬ್ರಹ್ಮಯ್ಯ
ಒಳ್ಳೆ ಪದಾರ್ಥಬಂದಡೆ ನೀಡೆಂಬಿರಿ, ಕೀಳುಪದಾರ್ಥಬಂದಡೆ ಬೇಡೆಂಬಿರಿ. ಕಮ್ಮಾದರೆ ನೀಡೆಂಬಿರಿ, ಆ ಪದಾರ್ಥ ಹೆಚ್ಚಾದರೆ ಪ್ರಸಾದ[ವೆಂದು] ಕೈಕೊಂಬಿರಿ. ಕಡ್ಡಿ ಹರಳು ಮೊದಲಾದ ಕಠಿನಪದಾರ್ಥ ಬಂದಡೆ, ಜಿಹ್ವೆಯಲ್ಲಿ ತೊಂಬಲವನಾರಿಸಿಬಿಡುವಿರಿ. ಮಕ್ಷಿಕ ಮೊದಲಾದ ಕ್ರಿಮಿಗಳು ಬಿದ್ದರೆ ಆರೂ ಅರಿಯದ ಹಾಗೆ ತೆಗೆದು ಸಿಪ್ಪದೆ ವರಸದೆ ಕದ್ದು ಚಲ್ಲುವಿರಿ. ಇಂತಪ್ಪ ಮೂಳಹೊಲೆಯರು ಪ್ರಸಾದಿಗಳೆಂದಡೆ ಪರಶಿವಪ್ರಸಾದಿಗಳಾದ ಶಿವಶರಣರು ಊರ ಸೂಳೆಯರ ಹಾಟಹೊಯಿಸಿ ತಲೆಯಬೋಳಿಸಿ ಪಟ್ಟಿಯ ತೆಗೆದು ಅವರ ಎಡಗಾಲಕೆರ್ಪಿನಿಂದ ಘಟ್ಟಿಸಿ ಮೂಡಲದಿಕ್ಕಿಗೆ ಅಟ್ಟಿದರು ಕಾಣಾ ಕಾಡನೊಳಗಾದ ಶಂಕರಪ್ರಿಯ ಚನ್ನಕದಂಬಲಿಂಗ ನಿರ್ಮಾಯಪ್ರಭುವೆ.
--------------
ಕಾಡಸಿದ್ಧೇಶ್ವರ
ಭಕ್ತನೊಂದು ಕುಲ, ಭವಿಯೊಂದು ಕುಲವೆಂಬರು. ಭಕ್ತನೆಂತಿಪ್ಪ ಭವಿಯೆಂತಿಪ್ಪನೆಂದರೆ, ಆರೂ ಅರಿಯರು. ಇದು ಬಲ್ಲವರು ತಿಳಿದು ನೋಡಿ. ಭಕ್ತನೆಂದರೆ ಅಂಗ, ಭವಿ ಎಂದರೆ ಲಿಂಗ, ಈ ಎರಡರ ಸಕೀಲಸಂಬಂಧವನರಿದರೆ, ಆತನೆ ನಮ್ಮ ಬಸವಪ್ರಿಯ ಕೂಡಲಚೆನ್ನಬಸವಣ್ಣ.
--------------
ಹಡಪದ ಅಪ್ಪಣ್ಣ
ಶಿವಂಗೆ ಪಂಚಮುಖವೆಂಬುದ ಮೂಲೋಕವೆಲ್ಲ ಬಲ್ಲುದು; ನರಂಗೆ ಪಂಚಮುಖವೆಂಬುದ ಆರೂ ಅರಿಯರು. ಮುಂಭಾಗವದು ಸದ್ಯೋಜಾತ, ಬಲಭಾಗವದು ತತ್ಪುರುಷ, ಎಡಭಾಗವದು ಅಘೋರ, ಹಿಂಭಾಗವದು ವಾಮದೇವ, ಮಧ್ಯಭಾಗವದು ಕಪಿಲಸಿದ್ಧಮಲ್ಲಿಕಾರ್ಜುನನ ಈಶಾನ್ಯಮುಖ ನೋಡಾ, ಕಲ್ಲಯ್ಯಾ.
--------------
ಸಿದ್ಧರಾಮೇಶ್ವರ
ತನ್ನ ಸಮ ಕ್ರೀವಂತರಲ್ಲಿಯಲ್ಲದೆ ಕೊಳುಕೊಡೆ ಮಿಕ್ಕಾದ ಹೊರಗಣ ಕ್ರೀ ಸೋಂಕು ಬಾಹ್ಯರಚನೆ ತಪ್ಪದಿರಬೇಕು. ಆತ್ಮನರಿದು ಮುಟ್ಟುವಲ್ಲಿ ತನ್ನ ವ್ರತದೆಸಕವನರಿದು ಸ್ವಪ್ನಾವಸ್ಥೆಗಳಲ್ಲಿದ್ದು ಸೂಕ್ಷ ್ಮತನುವಂ ಮುಟ್ಟದೆ, ಅಲ್ಲದುದ ಕಂಡು ಮತ್ತೆ ಆರೂ ಅರಿಯರೆಂದು ತನ್ನಲ್ಲಿಯೇ ಅಡಗದೆ, ತಲೆದೋರಿದಲ್ಲಿಯೇ ಲಯವಾಗಬೇಕು. ಇಂತೀ ಗುಣ ಆತ್ಮನ ಶೀಲ ಮನಕ್ಕೆ ಮನೋಹರ ಶಂಕೇಶ್ವರ ಲಿಂಗದಲ್ಲಿ.
--------------
ಕರುಳ ಕೇತಯ್ಯ
ಜ್ಯೋತಿಷ್ಯ ಘನವೆಂಬೋ ನೀತಿಗಾರನೇ ನೀ ಕೇಳು : ಅಷ್ಟಗ್ರಹಂಗಳ ಬಲವು ದೊಡ್ಡಿತೆಂದು ನೀ ಪೇಳುವೆ. ಗ್ರಹಂಗಳಿಗೆ ವಿಪತ್ತು ಬಂದಡೆ, ಆರೂ ತಿದ್ದಿಕೊಳಲರಿಯರು ! ಸೂರ್ಯನೇ ಘನವೆಂಬುವೆ, ಚಕ್ರದಂತೆ ತಿರುಗುವನೇಕೆ ? ಚಂದ್ರನೇ ಘನವೆಂಬುವೆ, ಕ್ಷಯರೋಗದಿಂದ ಹೊರಳುವನೇಕೆ ? ಬುಧನೇ ಘನವೆಂಬುವೆ, ಬುದ್ಧಿಯಿಲ್ಲದನೆನಿಸಿಕೊಂಬನೇಕೆ ? ಬೃಹಸ್ಪತಿಯೇ ಘನವೆಂಬುವೆ, ತನ್ನ ಸ್ವಪತ್ನಿಯ ಕಳಕೊಂಡನೇಕೆ ? ಶುಕ್ರನೇ ಘನವೆಂಬುವೆ, ಕೊಡುವ ದಾನಕ್ಕಡ್ಡಲಾದನೇಕೆ ? ಕಣ್ಣಕಳಕೊಂಡನೇಕೆ ? ಶನಿಯೇ ಘನವೆಂಬುವೆ, ಸಂಕೋಲೆಯೊಳಗಿರುವನೇಕೆ ? ರಾಹು ಘನವೆಂಬುವೆ, ಸೆರೆಮನೆಯೊಳು ಬಿದ್ದಿಹನೇಕೆ ? ಇಂಥಾ ಜ್ಯೋತಿಷ್ಯ ಮುಖ್ಯವೇ ? ಮುಖ್ಯವಲ್ಲಾ ! ಮುಖ್ಯವು ದಾವುದೆಂದಡೆ, ನಮ್ಮ ಪ್ರಮಥ ಗಣಾದ್ಥೀಶ್ವರರ ಪ್ರಸಾದ ವಾಕ್ಯವೇ ಸರ್ವಸಿದ್ಧ ಎಂದು ನಂಬುವೆ ಕಾಣಾ ಕೂಡಲಾದಿ ಚನ್ನಸಂಗಮದೇವಾ.
--------------
ಕೂಡಲಸಂಗಮೇಶ್ವರ
ಆರೂ ಇಲ್ಲದ ಅರಣ್ಯದ ಹುಲ್ಲತಂದು, ಮೂರು ಚಾಪೆಯ ಹೆಣೆದು, ಮುಪ್ಪುರದರಸಿಂಗೆ ಕೊಟ್ಟು, ಮೂವರ ತಲೆ ಹೊಡೆದು, ಕೈಕಾಲು ಕಡಿದು, ಕಣ್ಣು ಕಳೆದು, ಪರದ್ರವ್ಯ ಕೊಳ್ಳದೆ ಹರದ್ರವ್ಯ ಕಳೆಯದೆ ಕಾಯಕವ ಮಾಡುತ್ತಿರ್ಪರು ನೋಡೆಂದನಯ್ಯ ಕಾಡನೊಳಗಾದ ಶಂಕರಪ್ರಿಯ ಚನ್ನಕದಂಬಲಿಂಗ ನಿರ್ಮಾಯಪ್ರಭುವೆ.
--------------
ಕಾಡಸಿದ್ಧೇಶ್ವರ
ಪಂಚಾಂಗವ ಬರೆದು ಓದಿ ಮುಹೂರ್ತವ ಹೇಳುವರ ಕಂಡೆ. ಪಂಚಾಂಗವ ಪಿಡಿದು ಮುಹೂರ್ತವ ಕೇಳುವರ ಕಂಡೆ. ಪಂಚಾಂಗದ ಅಕ್ಷರವ ಕಲಿತು ಹೇಳುವರ ಕಂಡೆ. ಆ ಅಕ್ಷರವ ಕಲಿತು ಎಣಿಸುವರ ಕಂಡೆ. ಪಂಚಾಂಗದ ಭೇದವನು ಆರೂ ಅರಿಯರು. ಅರಿಯದೆ ನುಂಗಿ ಅಕ್ಷರವನಡಗಿಸಿ ಮರುಳನಂತೆ ಕಾಯಕವ ಮಾಡುತ್ತಿರ್ಪರು ಕಾಡನೊಳಗಾದ ಶಂಕರಪ್ರಿಯ ಚನ್ನಕದಂಬಲಿಂಗ ನಿರ್ಮಾಯಪ್ರಭುವೆ.
--------------
ಕಾಡಸಿದ್ಧೇಶ್ವರ
ಆ ಪರಶಿವನ ನಿಜಸ್ವರೂಪವೇ ಬ್ರಹ್ಮಾಂಡವಾಗಿ, ಪಿಂಡಾಂಡವಾಗಿ, ಕರಣಂಗಳಾಗಿ, ಕರ್ಮಂಗಳಾಗಿ, ಸೃಷ್ಟಿ ಸ್ಥಿತಿ ಲಯಂಗಳಾಗಿ, ನೋವು ಸಾವುಗಳಾಗಿ, ತಾನೇ ಇದ್ದದ್ದು, ಸರ್ವವು ತಾನೆಂಬುದು ತಾನೇ ಮರೆತು, ಶಿಶುವು ತಾನಾಡುವ ಆಟದಲ್ಲಿ, ಕಲ್ಲಿಗೆ ಕಾಲ ತಗಲಿಸಿಕೊಂಡು ಅಳುವಂತೆ, ವಿಷಯದಿಚ್ಛೆಯಲ್ಲಿ ನೊಂದು ಶೋಕಿಸುತ್ತಿರಲು, ಆ ಶಿಶುವಿಗೆ ತಂದಿ ಬಂದು ಕಣ್ಣೀರೊರಸಿ, ಆ ಕಲ್ಲತಗಲಿದ ಕಾಲ್ನೋವಿಗೆ ಔಷದ್ಥಿಯ ಮಾಡಿ, ತನ್ನ ಹೆಂಡತಿಯ ಕರೆದು, ಮಗನ ಸಮಾಧಾನಮಾಡೆಂದು ಹೇಳಲು, ಆ ತಾಯಿಯೆತ್ತಿಕೊಂಡು, ಕಣ್ಣು, ಮೂಗು, ಕಿವಿ, ಬಾಯಿ, ಮೈ ಧೂಳವನ್ನೆಲ್ಲಾ ತಾ ಹೊದ್ದ ಮೇಲ್‍ಸೆರಗಿಲೊರಸಿ ಮೊಲೆಯುಣಿಸಿ, ತೊಟ್ಟಿಲೊಳು ಹಾಸಿ ಮಲಗಿಸಿ ಹೊಚ್ಚಿ ಹೆಂಗ ಮಂಗಲ ನುಡಿ, ನಮ್ಮಪ್ಪ ಅರಸ ಛೀಮಾರಿ ಛೀ ಛೀ ಛೀ ಅಳುಳುಳುಳುಳುಳೆಂದು ಹಾಡುತ್ತಿರಲು, ಆ ಶಿಶುವು ಆ ಔಷಧದಿಂದೆ ನೋವು ಹೋಗಿ, ತಾಯಿಯ ಮೊಲೆಹಾಲಿನಿಂದೆ ಹಸಿವು ಅಡಗಿ, ಆ ಜೋಗುಳಹಾಡಿಗೆ ಸೊಂಪುದೋರಿ ಸುಮ್ಮನಾಗಿ, ತೊಟ್ಟಿಲ ತೂಗುವುದರೊಳಗೆ ಜೋಕಬಂದು, ಸುಖನಿದ್ರೆಯೊಳ್ ಮೈಮರೆದಿರಲು, ಮಾಯೆಸರ್ಪನು ಬಂದು ಕಚ್ಚಿ ಕಾಣಿಸಿಕೊಳ್ಳದೆ ಹೋಗಲು, ಆ ತಾಯಿ ತಂದಿ ಉಂಡು ಮಂಚದಮ್ಯಾಲೆ, ರತಿಸಂಭೋಗಸುಖನಿದ್ರೆಯಲ್ಲಿರೆ, ಮಾಳಿಗೆ ಬಿದ್ದು ಮರಣವಾಗಲು, ಆ ತಾಯಿ ತಂದಿಯು ಮಗ ಈ ಮೂವರು ಮಾಳಿಗೆ ಬಿದ್ದು ಮರಣವಾದರೆಂಬುದಾಯಿತ್ತಲ್ಲದೆ, ಆ ಶಿಶುವಿನ ಸಾವು ಆರು ಅರಿಯರು. ಇದರ ಹಾಂಗೆ ತನ್ನ ವಿಷಯದಿಚ್ಛೆಗೆ ಓಡ್ಯಾಡಿ ಕಾಲನ ಬಾಧೆಗೆ ಬಿದ್ದು ಭವದುಃಖದೊಳಗಿರುವ ನರರಿಗೆ ತಾನೇ ಗುರುವಾಗಿ ಬಂದು, ಸಾನಂದಸಿದ್ಧರಾಮನು ಹೀನ ನರಕಿಗಳ ತಗೆದಂತೆ, ಆ ಶಿಷ್ಯನ ಕೈಹಿಡಿದೆತ್ತಿ ಸರ್ವಕರಣಗಳ ಶುದ್ಧಗೊಳಿಸಿ, ಶಿಕ್ಷೋಪದೇಶವಮಾಡಿ, ತನ್ನ ಚಿತ್‍ಶಕ್ತಿಯ ಕರಸಂಜ್ಞೆ ನುಡಿನೋಟದಿಂದೆ ತೋರಿ ಹೇಳಿ ಕಾಣಿಸಿಕೊಡಲು, ಆ ಚಿತ್‍ಶಕ್ತಿ ಹತಿಗೊಂಡು ನಿತ್ಯತ್ವದ ನುಡಿ ಮನದ ಮೈಲಿಗೆಯ ತೊಳೆದು ತನ್ನ ಮೇಲುಮುಸುಕಿದ ಮಹಾಜ್ಞಾನದ ಬೆಳಗಿನಲ್ಲಿ ಸರ್ವ ಅವಯವಂಗಳ ಕಸರು ಕಳೆದು, ಆತ್ಮಜ್ಞಾನದೊಳಗೆ ಅಖಂಡಜ್ಞಾನದಲ್ಲಿರಿಸಿ, ಬ್ರಹ್ಮಜ್ಞಾನವನಾಚ್ಛಾದಿಸಿ, ನಿಜಜ್ಞಾನದಲ್ಲಿ ಲೋಲ್ಯಾಡಿ, ಅರುವಿನ ಹರುಷದಲ್ಲಿ ಹಿಂದಿಂದು ಹೇಯವಾಗೆ ಮುಂದಿಂದು ಹಿತವಚನ ಮುಂದೆ ಅಲ್ಲಲ್ಲಾ, ಸರ್ವವು ಸುಳ್ಳು ಸುಳ್ಳೆಂಬ ಮಹದರುವಿನ ಅನುಭವದ ಶಿವೋಹಂ ಶಿವೋಹಂ ಶಿವೋಹಂ, ಸೋಹಂ, ಸೋಹಂ, ಸೋಹಂ, ನಮೋ ನಮೋ, ಓಂ ಓಂ ಓಂ ಓಂ ಓಂ ಓಂ ಓಂ ಓಂ ಓಂ ಓಂ ಏಂ ಏಂ ಏಂ ಏಂ ಏಂ ಎಂಬ ಮಹಾನಾದದೊಳಗೆ ಆ ಕಾಲನ ಬಾಧೆ ಹೋಗಿ, ಭವದುಃಖ ಹಿಂಗಿ, ಚಿತ್ತಚಿನ್ಮಯ ಸವಿಗೊಂಡು ನಿತ್ಯ ತೃಪ್ತನಾಗಿ, ನಿಜಲೀಲಾನುಭವದ ಶಬ್ದಕ್ಕೆ ಮುಗ್ಧನಾಗಿ, ಆತ್ಮಜ್ಞಾನದ ನಲಿಗಿನೊಳಗೆ ಲೋಲಗೊಂಡು, ಎಚ್ಚರಡಗಿ ಅಚ್ಚಸುಖದಲ್ಲಿ ಸಮರಸವಾಗಿರಲು, ಸಾವು ಬಂದು ಸಾವು ಸತ್ತು ಸಾವು ಸಾವಾಗಲು ಆ ಶರಣನ ಅಂಗ, ಮನ, ಭಾವ, ಆತ್ಮಸಂಗವೊಂದಾಗಿರೆ ಶ್ವಾಸ ಸುಳುಹುಗಳೆಲ್ಲಾ ನಿಂದು, ಚಿತ್ತ ಸತ್ತು ಸ್ವಸ್ಥವಾಗಲು, ನಿಜಶರಣನ ಅರುವು ಲಿಂಗದಲ್ಲಿ ಪರವಶರಾಗಿಹರೆಂಬುದು ಬಲ್ಲರಲ್ಲದೆ ಅರುವು ಮರೆಗೊಂಡಿರ್ಪ ನಿರ್ಬೈಲ ಆರೂ ಅರಿಯರೋ. ಆ ಶರಣ ತನ್ನರುವು ತಾನರಿಯ, ಸತ್ತ ಸುದ್ದಿ ಸತ್ತವ ಅರಿಯ, ಬದುಕಿದವ ಬಲ್ಲ. ಇದೇ ನಿಜಮುಕ್ತಿ ; ಇದನರಿಯದೆ, ತತ್ವವನೋದಿ ಗಾಳಿಗೊದರುವ ಒಡಕುಮಡಕಿಯ ಸ್ವರವ ಕಡಿಮಿಯಾದ ನಾದವನು ಆಲಿಸಿ, ನಾಹಂಬ್ರಹ್ಮವ ನುಡಿದು, ಕೋಹಂಬ್ರಹ್ಮವ ಬೆರೆತು, ಮುಂದೆ ಸೋಹಂ ಬ್ರಹ್ಮವ ಹುಡುಕದೆ, ದಾಸೋಹಂಬ್ರಹ್ಮವ ಕೂಡದೆ, ನಮಗೆ ಸಾವು ಇಲ್ಲಾ, ನಮ್ಮ ದೇಹ ಬೈಲು ಮಾಡುವೆವೆಂದು ಅದು ತಪ್ಪಲಿಕ್ಕೆ ಪಂಚತತ್ವದೇಹವು, ಪಂಚತತ್ವಕ್ಕೆ ಕೂಡಿಸುವೆವು ಎಂಬುವರು. ಅದು ಹಾಂಗಿರಲು, ಆ ದೇಹ ಬಯಲುವಾದರೇನು ? ಆ ಬಯಲಿಗೆ ಸಾವು ಇಲ್ಲವು. ತಾವು ಮಾಡಿದರೆ ಆಗುವುದೆ ? ತಾನೇ ಆಗಲರಿಯದು. ಎಷ್ಟು ನಿಜ ತಿಳಿದರೇನೋ ? ಅಷ್ಟು ತಾವಾಗದೇ, ಭ್ರಷ್ಟರಾಗಿ ಹೋದರೋ ನಿರುಪಮ ನಿರಾಳ ಮಹತ್ಪ್ರಭು ಮಹಾಂತಯೋಗಿ.
--------------
ಮಡಿವಾಳಪ್ಪ / ಕಡಕೋಳ ಮಡಿವಾಳಪ್ಪ
ಪ್ರಮಥಗಣಂಗಳ ಪ್ರಸಾದಕೊಂಡದಲ್ಲಿ ಅಡಗಿದ ಗೊತ್ತ ಆರೂ ಅರಿಯರಲ್ಲ, ಬಸವಣ್ಣಂಗೆ ಪ್ರಭುದೇವರು ತೋರಿ ಕೊಟ್ಟನು. ಕಾಡನೊಳಗಾದ ಶಂಕರಪ್ರಿಯ ಚನ್ನಕದಂಬಲಿಂಗ ನಿರ್ಮಾಯಪ್ರಭುವೆ.
--------------
ಕಾಡಸಿದ್ಧೇಶ್ವರ
ಗುರುವಿಂಗೆ ಗುರುವಿಲ್ಲ, ಲಿಂಗಕ್ಕೆ ಲಿಂಗವಿಲ್ಲ ; ಜಂಗಮಕ್ಕೆ ಜಂಗಮವಿಲ್ಲ, ನನಗೆ ನಾನಿಲ್ಲ. ಕಣೆರೆದು ನೋಡುವಡೆ ಆರಿಗೆ ಆರೂ ಇಲ್ಲ, ಕಪಿಲಸಿದ್ಧಮಲ್ಲಿಕಾರ್ಜುನಾ.
--------------
ಸಿದ್ಧರಾಮೇಶ್ವರ
ಲಿಂಗವಂತನು ಲಿಂಗವಿಲ್ಲದರ ಬಯಸಿದಡೆ ಆತಂಗೆ ಲಿಂಗವಿಲ್ಲ, ಲಿಂಗವಿಲ್ಲದವನು ಆರಿಗೂ ಬಾತೆ ಅಲ್ಲ. ಬಾತೆ ಅಲ್ಲದವಂಗೆ ಆರೂ ಸ್ನೇಹಿಸರು, ಆರು ಏನನೂ ಕೊಡರು. ಇದು ಕಾರಣ, ದುರಾಶೆಯಂ ಬಿಟ್ಟು ನಿರಾಶೆಯಾಗಿ ಲಿಂಗವನಾಶ್ರೈಸಿದಡೆ ಪ್ರಸಾದವಪ್ಪುದು ಪ್ರಸಾದದಿಂದಿಹಪರ ಸಿದ್ಧಿ ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರ.
--------------
ಉರಿಲಿಂಗಪೆದ್ದಿ
ಇನ್ನಷ್ಟು ... -->