ಅಥವಾ

ಒಟ್ಟು 25 ಕಡೆಗಳಲ್ಲಿ , 10 ವಚನಕಾರರು , 22 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕುರುಡಿ ಕುಂಟರ ನಡುವೆ ನಾ ಹುಟ್ಟಿದೆನಯ್ಯಾ. ಎನಗೆ ಐವರು ಸ್ತ್ರೀಯರ ಮದುವೆಯ ಮಾಡಿದರು. ಅವರ ಸಂಗದಲ್ಲಿರಲೊಲ್ಲದೆ ಒಬ್ಬಳ ಬ್ರಹ್ಮಂಗೆ ಕೊಟ್ಟೆ, ಒಬ್ಬಳ ವಿಷ್ಣುವಿಂಗೆ ಕೊಟ್ಟೆ, ಒಬ್ಬಳ ರುದ್ರಂಗೆ ಕೊಟ್ಟೆ, ಒಬ್ಬಳ ಈಶ್ವರಂಗೆ ಕೊಟ್ಟೆ, ಮತ್ತೊಬ್ಬಳ ಸದಾಶಿವಂಗೆ ಕೊಟ್ಟು ತಾಯಿಯ ಒಡನಾಡಿ ಸಂಸಾರ ಮಾಡುತಿರ್ದನಯ್ಯಾ ನಿಮ್ಮ ಶರಣ ಕಾಡನೊಳಗಾದ ಶಂಕರಪ್ರಿಯ ಚನ್ನಕದಂಬಲಿಂಗ ನಿರ್ಮಾಯಪ್ರಭುವೆ.
--------------
ಕಾಡಸಿದ್ಧೇಶ್ವರ
ಆರುಲಿಂಗದಲ್ಲಿ ಅರತೆನೆಂಬ ಅರಿವುಗೇಡಿಗಳು ನೀವು ಕೇಳಿರೊ. ಆರುಲಿಂಗ ನಿಮಗೆಂತಪ್ಪವು? ಆಚಾರಲಿಂಗ ಬ್ರಹ್ಮಂಗೆ ಸಂಬಂಧವಾಯಿತ್ತು. ಗುರುಲಿಂಗ ವಿಷ್ಣುವಿಂಗೆ ಸಂಬಂಧವಾಯಿತ್ತು. ಶಿವಲಿಂಗ ರುದ್ರಂಗೆ ಸಂಬಂಧವಾಯಿತ್ತು. ಜಂಗಮಲಿಂಗ ಈಶ್ವರಂಗೆ ಸಂಬಂಧವಾಯಿತ್ತು. ಪ್ರಸಾದಲಿಂಗ ಸದಾಶಿವಂಗೆ ಸಂಬಂಧವಾಯಿತ್ತು. ಮಹಾಲಿಂಗ ಪರಶಿವಂಗೆ ಸಂಬಂಧವಾಯಿತ್ತು. ಇಂತೀ ಆರುದರುಶನಕ್ಕೆ ಸಂಬಂಧವಾಯಿತ್ತು. ನಿಮ್ಮ ಸಂಬಂಧವ ಬಲ್ಲರೆ ಹೇಳಿರೊ? ಗುರುಲಿಂಗಜಂಗಮವೆಂಬ ತ್ರಿವಿಧಸಂಬಂಧ; ಆರು ಪರಿಯ ಶಿಲೆಯ ಮೆಟ್ಟಿ ಮುಂಬಾಗಿಲವ ತೆರೆದು ಶ್ರೀಗುರುವಿನ ಪ್ರಸಾದವ ಸವಿದು ಮುಂದಿರ್ದ ಲಿಂಗಸಂಗದ ಅರ್ಪಿತ ದರುಶನವೆಂಬೊ ಜಂಗಮವ ನೋಡುತ್ತ ನೋಡುತ್ತ ನಿಬ್ಬೆರೆಗಾದರು ನೋಡಾ. ಆರನು ಮೀರಿ, ಮೂರನು ಮೆಟ್ಟಿ, ತಟ್ಟುಮುಟ್ಟುಗಳೆಂಬ ಭ್ರಮೆಗಳನೊಲ್ಲದೆ ಐವತ್ತೆರಡರೊಳಗಾಗಿ ಅರಿಯಲಾರದೆ ಮೀರಿಹೋದರು ನಮ್ಮ ಗೊಹೇಶ್ವರಪ್ರಿಯ ನಿರಾಳಲಿಂಗ.
--------------
ಗುಹೇಶ್ವರಯ್ಯ
ಬ್ರಹ್ಮಂಗೆ ಸರಸ್ವತಿಯಾಗಿ ವಿಷ್ಣುವಂ ಪೂಜೆಯಂ ಮಾಡಲು, ವಿಷ್ಣುವಿಂಗೆ ಲಕ್ಷ್ಮಿಯಾಗಿ ರುದ್ರನ ಪೂಜೆಯ ಮಾಡಲು, ರುದ್ರಂಗೆ ಕ್ರಿಯಾಶಕ್ತಿಯಾಗಿ ಈಶ್ವರನ ಪೂಜೆಯಂ ಮಾಡಲು, ಈಶ್ವರಂಗೆ ಇಚ್ಫಾಶಕ್ತಿಯಾಗಿ ಸದಾಶಿವನ ಪೂಜೆಯಂ ಮಾಡಲು, ಸದಾಶಿವಂಗೆ ಜ್ಞಾನಶಕ್ತಿಯಾಗಿ ಪರಶಿವನ ಪೂಜೆಯನ್ನು ಮಾಡಲು, ಪರಶಿವಂಗೆ ಪರಾಶಕ್ತಿಯಾಗಿ ಪರಬ್ರಹ್ಮನ ಪೂಜೆಯ ಮಾಡಲು, ಪರಬ್ರಹ್ಮಂಗೆ ಚಿತ್‍ಶಕ್ತಿಯಾಗಿ ಇಂತಿರ್ದ ಬ್ರಹ್ಮರ ಪೂಜೆಯಂ ಮಾಡುವುದ ಕಂಡೆ ನೋಡಾ ಝೇಂಕಾರ ನಿಜಲಿಂಗಪ್ರಭುವೆ.
--------------
ಜಕ್ಕಣಯ್ಯ
ಗುರುತ್ವವುಳ್ಳ ಮಹದ್ಗುರುವನರಿಯದೆ ನಾನು ಗುರು ತಾನು ಗುರುವೆಂದು ನುಡಿವಿರಿ. ಧನದಲ್ಲಿ ಗುರುವೆ? ಮನದಲ್ಲಿ ಗುರುವೆ? ತನುವಿನಲ್ಲಿ ಗುರುವೆ? ನಿತ್ಯದಲ್ಲಿ ಗುರುವೆ? ವಿದ್ಯೆಯಲ್ಲಿ ಗುರುವೆ? ಭಕ್ತಿಯಲ್ಲಿ ಗುರುವೆ? ಜ್ಞಾನದಲ್ಲಿ ಗುರುವೆ? ವೈರಾಗ್ಯದಲ್ಲಿ ಗುರುವೆ? ದೀಕ್ಷೆಯಲ್ಲಿ ಗುರುವೆರಿ ಶಿಕ್ಷೆಯಲ್ಲಿ ಗುರುವೆರಿ ಸ್ವಾನುಭಾವದಲ್ಲಿ ಗುರುವೆರಿ ಮಾತಾಪಿತರಲ್ಲಿ ಗುರುವೆರಿ ದೇವದಾನವ ಮಾನವರೆಲ್ಲರು ನೀವೆಲ್ಲರು ಆವ ಪರಿಯಲ್ಲಿ ಗುರು ಹೇಳಿರಣ್ಣಾ? ಗುರುವಾರು ಲಘುವಾರೆಂದರಿಯರಿ, ಮನ ಬಂದಂತೆ ನುಡಿದು ಕೆಡುವಿರಾಗಿ. ಹರಿಬ್ರಹ್ಮರು ಗುರುತ್ವಕ್ಕೆ ಸಂವಾದಿಸಿ ಮಹದ್ಗುರುವಪ್ಪ ಪರಂಜ್ಯೋತಿರ್ಲಿಂಗದ ಆದಿಮಧ್ಯಾವಸಾನದ ಕಾಲವನರಿಯದೆ ಲಘುವಾಗಿ ಹೋದರು. ಮತ್ತಂ ಅದೊಮ್ಮೆ ವಿಷ್ಣ್ವಾದಿ ದೇವಜಾತಿಗಳೆಲ್ಲರೂ ನೆರೆದು ನಾ ಘನ, ತಾ ಘನ, ನಾನು ಗುರು, ತಾನು ಗುರುವೆಂದು ಮಹಾಸಂವಾದದಿಂದ ಅತಿತರ್ಕವ ಮಾಡಿ ಗುರುತ್ವವುಳ್ಳ ಪುರುಷನ ನಿಶ್ಚೈಸಲರಿಯದೆ, ಆ ಸಭಾಮಧ್ಯದಿ ಪರಮಾಕಾಶದಿ `ಅತ್ಯತಿಷ*ದ್ದಶಾಂಗುಲನೆನಿಪ' ಮದ್ಗುರುವಪ್ಪ ಮಹಾಲಿಂಗವು ಇವರುಗಳ ಅಜ್ಞಾನವ ಕಂಡು ಮಹಾವಿಪರೀತಕ್ರೀಯಲ್ಲಿ ನಗುತಿರಲು ನಮ್ಮೆಲ್ಲರನೂ ನೋಡಿ ನಗುವ ಪುರುಷನಾರು? ಈ ಪುರುಷನ ನೋಡುವ, ಈ ಪುರುಷನಿಂದ ನಮ್ಮಲ್ಲಿ ಆರು ಘನ ಆರು ಗುರುವೆಂದು ಕೇಳುವೆವೆಂದು ಆ ಮಹಾಪುರುಷನ ಸಮೀಪಕ್ಕೆ ಅಗ್ನಿ ವಾಯು ಮೊದಲಾಗಿಹ ದೇವಜಾತಿಗಳೆಲ್ಲರೂ ಪ್ರತ್ಯೇಕರಾಗಿ ಹೋಗಲು ಅತ್ಯತಿಷ*ದ್ದಶಾಂಗುಲಮಾಗಿರ್ದು ಇವರುಗಳ ಗುರುತ್ವವೆಲ್ಲವನೂ ಒಂದೇ ತೃಣದಲ್ಲಿ ಮುರಿದು ತೃಣದಿಂದವೂ ಕಷ್ಟ ಲಘುತ್ವವ ಮಾಡಿದನು. ಇದು ಕಾರಣ, ಪರಶಿವನೆ ಮದ್ಗುರು ಕಾಣಿರೆ. ಧನದಲ್ಲಿ ಗುರುವೆರಿ ನೀವೆಲ್ಲರು ಧನದಲ್ಲಿ ಗುರುವೆಂಬಡೆ ನೀವು ಕೇಳಿರೆ, ಕಾಣಿವುಳ್ಳವಂಗೆ ಶತಸಂಖ್ಯೆ ಉಳ್ಳವನೆ ಗುರು, ಶತಸಂಖ್ಯೆ ಉಳ್ಳವಂಗೆ ಸಹಸ್ರಸಂಖ್ಯೆ ಉಳ್ಳವನೆ ಗುರು, ಸಹಸ್ರಸಂಖ್ಯೆ ಉಳ್ಳವಂಗೆ ಮಹದೈಶ್ವರ್ಯ ಉಳ್ಳವನೆ ಗುರು, ಮಹದೈಶ್ವರ್ಯ ಉಳ್ಳವಂಗೆ ಕಾಮಧೇನು ಕಲ್ಪವೃಕ್ಷ ಚಿಂತಾಮಣಿ ಮೊದಲಾದ ಮಹದೈಶ್ವರ್ಯವುಳ್ಳ ಇಂದ್ರನೆ ಗುರು. ಇಂದ್ರಂಗೆ ಅನೂನೈಶ್ವರ್ಯವನುಳ್ಳ ಬ್ರಹ್ಮನೆ ಗುರು, ಆ ಬ್ರಹ್ಮಂಗೆ ಐಶ್ವರ್ಯಕ್ಕೆ ಅಧಿದೇವತೆಯಪ್ಪ ಮಹಾಲಕ್ಷ್ಮಿಯನುಳ್ಳ ವಿಷ್ಣುವೆ ಗುರು, ಆ ವಿಷ್ಣುವಿಂಗೆ ಅಷ್ಟಮಹದೈಶ್ವರ್ಯವನುಳ್ಳ ರುದ್ರನೆ ಗುರು, ಆ ರುದ್ರಂಗೆ ಈಶ್ವರನೆ ಗುರು, ಈಶ್ವರಂಗೆ ಸದಾಶಿವನೆ ಗುರು. ಬ್ರಹ್ಮಾ ವಿಷ್ಣುಶ್ಚ ರುದ್ರಶ್ಚ ಈಶ್ವರಶ್ಚ ಸದಾಶಿವಃ ಯೇ ತೇ ಗರ್ಭಗತಾ ಯಸ್ಯ ತಸ್ಮೈ ಶ್ರೀಗುರವೇ ನಮಃ ಎಂದುದಾಗಿ, ಅಂತಹ ಸದಾಶಿವಂಗೆ ಎಮ್ಮ ಪರಶಿವಮೂರ್ತಿ ಶ್ರೀಗುರುವೆ ಗುರು ಕಾಣಿರೆ. ಮನದಲ್ಲಿ ಗುರುವೇ ನೀವೆಲ್ಲರು ದುರ್ಮನಸ್ಸಿಗಳು ಪರಧನ ಪರಸ್ತ್ರೀ ಅನ್ಯದೈವಕ್ಕೆ ಆಸೆ ಮಾಡುವಿರಿ. ಇಂತಹ ದುರ್ಮನಸ್ಸಿನವರನೂ ಸುಮನವ ಮಾಡಿ ಸುಜ್ಞಾನಪದವ ತೋರುವ ಪರಶಿವಮೂರ್ತಿ ಶ್ರೀಗುರುವೆ ಗುರು ಕಾಣಿರೆ. ತನುವಿನಲ್ಲಿ ಗುರುವೆ? ಜನನ ಮರಣ ಎಂಬತ್ತುನಾಲ್ಕು ಲಕ್ಷ ಯೋನಿಯಲ್ಲಿ ಜನಿಸುವ ಅನಿತ್ಯತನು ನಿಮಗೆ. ಇಂತಪ್ಪ ತನುವನುಳ್ಳವರ ಪೂರ್ವಜಾತನ ಕಳೆದು, ಶುದ್ಧತನುವ ಮಾಡಿ ಪಂರ್ಚಭೂತತನುವ ಕಳೆದು, ಶುದ್ಧತನುವ ಮಾಡಿ ಭಕ್ತಕಾಯ ಮಮಕಾಯವೆಂದು ಶಿವನುಡಿದಂತಹ ಪ್ರಸಾದಕಾಯವ ಮಾಡಿ ನಿತ್ಯಸುಖದೊಳಿರಿಸಿದ ಪರಶಿವಮೂರ್ತಿ ಶ್ರೀಗುರುವೇ ಗುರು ಕಾಣಿರೆ. ವಿದ್ಯೆಯಲ್ಲಿ ಗುರುವೆ? ನೀವೆಲ್ಲರು ವೇದದ ಬಲ್ಲಡೆ, ಶಾಸ್ತ್ರವನರಿಯರಿ, ವೇದಶಾಸ್ತ್ರವ ಬಲ್ಲಡೆ, ಪುರಾಣವನರಿಯರಿ, ವೇದಶಾಸ್ತ್ರಪುರಾಣವ ಬಲ್ಲಡೆ, ಆಗಮವನರಿಯರಿ, ವೇದಶಾಸ್ತ್ರಪುರಾಣ ಆಗಮನ ಬಲ್ಲಡೆ ಅವರ ತಾತ್ಪರ್ಯವನರಿಯರಿ, ಅಷ್ಟಾದಶವಿದ್ಯೆಗಳ ಮರ್ಮವನರಿಯರಿ. ವೇದಂಗಳು, `ಏಕ ಏವ ರುದ್ರೋ ನ ದ್ವಿತೀಯಾಯ ತಸ್ಥೇ' ಎಂದವು. ಅದನ್ನರಿಯರಿ ನೀವು, ಅನ್ಯವುಂಟೆಂಬಿರಿ, `ಶಿವ ಏಕೋ ದ್ಯೇಯಃ ಶಿವಶಂಕರಃ ಸರ್ವಮನ್ಯತ್ಪರಿತ್ಯಾಜ್ಯಂ' ಅಂದವು, ನೀವು ಅನ್ಯವ ಧ್ಯಾನಿಸುವಿರಿ, ಅನ್ಯವ ಪೂಜಿಸುವಿರಿ, ವಿದ್ಯೆ ನಿಮಗಿಲ್ಲ, ನಿಮಗೆ ಹೇಳಿಕೊಡುವ ವ್ಯಾಸಾದಿಗಳಿಗಿಲ್ಲ, ಅವರಿಗೆ ಅಧಿಕನಾಗಿಹ ವಿಷ್ಣುಬ್ರಹ್ಮಾದಿಗಳಿಗಿಲ್ಲ, ವೇದಾದಿ ಅಷ್ಟಾದಶವಿದ್ಯೆಗಳ ಶಿವನೆ ಬಲ್ಲನು. ಸರ್ವವಿದ್ಯೆಗಳನೂ ಶಿವನೇ ಮಾಡಿದನು, ಶಿವನೇ ಕರ್ತನು `ಆದಿಕರ್ತಾ ಕವಿಸ್ಸಾಕ್ಷಾತ್ ಶೂಲಪಾಣಿರಿತಿಶ್ರುತಿಃ ಎಂದುದಾಗಿ. `ನಮೋ ಮಂತ್ರಿಣೇ ವಾಣಿಜಾಯ ಕಕ್ಷಾಣಾಂ ಕತಯೇ ನಮಃ ಎಂದುದಾಗಿ, `ಈಶಾನಸ್ಸರ್ವವಿದ್ಯಾನಾಂ ಎಂದುದಾಗಿ, ವಿದ್ಯಾರೂಪನಪ್ಪ ಎಮ್ಮ ಪರಶಿವಮೂರ್ತಿ ಶ್ರೀಗುರುವೇ ವಿದ್ಯೆಯಲ್ಲಿ ಗುರು ಕಾಣಿರೆ, ದೀಕ್ಷೆಯಲ್ಲಿ ಗುರುವೇರಿ ನೀವು `ವರ್ಣಾನಾಂ ಬ್ರಾಹ್ಮಣೋ ಗುರುಃ' ಎಂಬಿರಿ, ಆ ವಿಷ್ಣುವ ಭಜಿಸಿ ವಿಷ್ಣುವೇ ಗುರುವೆಂಬಿರಿ. ಅಂತಹ ವಿಷ್ಣುವಿಂಗೆಯೂ ಉಪಮನ್ಯು ಗುರು ಕಾಣಿರೆ. ಅಂತಹ ಉಪಮನ್ಯು ಮೊದಲಾದ ದೇವಋಷಿ ಬ್ರಹ್ಮಋಷಿ ರಾಜಋಷಿ ದೇವಜಾತಿ ಮಾನವಜಾತಿಗಳಿಗೆ ಪರಶಿವನಾಚಾರ್ಯನಾಗಿ ಉಪದೇಶವ ಮಾಡಿದನು. ವೇದಶಾಸ್ತ್ರ ಆಗಮ ಪುರಾಣಂಗಳಲ್ಲಿ, ವಿಚಾರಿಸಿ ನೋಡಿರೆ. ಅದು ಕಾರಣ ಮಹಾಚಾರ್ಯನು ಮಹಾದೀಕ್ಷಿತನಪ್ಪ ಎಮ್ಮ ಪರಶಿವಮೂರ್ತಿ ಮಹಾಸದ್ಗುರುವೇ ಗುರು ಕಾಣಿರೆ. ಶಿಕ್ಷೆಯಲ್ಲಿ ಗುರುವೇರಿ ನಿಮಗೆ ಶಿಕ್ಷಾಸತ್ವವಿಲ್ಲ. ವೀರಭದ್ರ ದೂರ್ವಾಸ ಗೌತಮಾದಿಗಳಿಂ ನೀವೆಲ್ಲಾ ಶಿಕ್ಷೆಗೊಳಗಾದಿರಿ. ಶಿಕ್ಷಾಮೂರ್ತಿ ಚರಲಿಂಗವಾಗಿ ಶಿಕ್ಷಿಸಿ ರಕ್ಷಿಸಿದನು ಪರಶಿವನು. ಯೇ ರುದ್ರಲೋಕಾದವತೀರ್ಯ ರುದ್ರಾ ಮಾನುಷ್ಯಮಾಶ್ರಿತ್ಯ ಜಗದ್ಧಿತಾಯ ಚರಂತಿ ನಾನಾವಿಧಚಾರುಚೇಷ್ಟಾಸ್ತೇಭ್ಯೋ ನಮಸ್ತ್ರ್ಯಂಬಕಪೂಜಕೇಭ್ಯಃ ಎಂದುದಾಗಿ, ದಂಡಕ್ಷೀರದ್ವಯಂ ಹಸ್ತೇ ಜಂಗಮೋ ಭಕ್ತಿಮಂದಿರಂ ಅತಿಭಕ್ತ್ಯಾ ಲಿಂಗಸಂತುಷ್ಟಿರಪಹಾಸ್ಯಂ ಯಮದಂಡನಂ ಎಂದುದಾಗಿ, ಶಿಕ್ಷೆಯಲ್ಲಿ ಗುರು ಎಮ್ಮ ಪರಶಿವಮೂರ್ತಿ ಮದ್ಗುರುವೇ ಗುರು ಕಾಣಿರೆ. ಸ್ವಾನುಭಾವದಲ್ಲಿ ಗುರುವೆ? ನೀವು ದೇವದಾನವಮಾನವರೆಲ್ಲರು ದೇಹಗುಣವಿಡಿದು ಮದಾಂಧರಾಗಿ ಸ್ವಾನುಭಾವ[ರಹಿತರಾದಿರಿ]. ಸ್ಕಂದ ನಂದಿ ವೀರಭದ್ರ ಭೃಂಗಿನಾಥ ಬಸವರಾಜ ಮೊದಲಾದ ಎಮ್ಮ ಮಾಹೇಶ್ವರರೇ ಸ್ವಾನುಭಾವಸಂಪನ್ನರು. ಇಂತಹ ಮಹಾಮಹೇಶ್ವರರಿಗೆ ಸ್ವಾನುಭಾವವ ಕರುಣಿಸಬಲ್ಲ ಎಮ್ಮ ಪರಶಿವಮೂರ್ತಿ ಮಹದ್ಗುರು[ವೇ] ಸ್ವಾನುಭಾವದಲ್ಲಿ ಗುರು ಕಾಣಿರೆ. ಮಾತಾಪಿತರ ಗುರುವೆಂಬಿರಿ, ಲಘುವಿನಲ್ಲಿ ತಾವೆಲ್ಲರು ಜನಿಸಿದಿರಿ. ತಮ್ಮ ಸ್ಥಿತಿಯೂ ಲಘು, ಲಘುವಾಗಿ ಲಯವಪ್ಪುದು ಗುರುವೆ? ಅಲ್ಲ. ಸೋಮಃ ಪವತೇ ಜನಿತಾ ಮತೀನಾಂ ಜದಿತಾ ದಿವೋ ಜನಿತಾ ಪೃಥ್ವಿವ್ಯಾ ಜನಿತಾಗ್ನೇರ್ಜನಿತಾ ಸೂರ್ಯಸ್ಯ `ಜನಿತೋಥವಿಷ್ಣೋಃ ಎಂದುದಾಗಿ, `ಶಿವೋ ಮಮೈವ ಪಿತಾ ಎಂದುದಾಗಿ, ಸರ್ವರಿಗೂ ಮಾತಾಪಿತನಪ್ಪ ಎಮ್ಮ ಪರಶಿವಮೂರ್ತಿ ಮಹಾಸದ್ಗುರುವೇ ಗುರು ಕಾಣಿರೊ. ಭಕ್ತಿಯಲ್ಲಿ ಗುರುವೆ? ನಿಮಗೆ ಲವಲೇಶ ಭಕ್ತಿಯಿಲ್ಲ, ನೀವೆಲ್ಲರು ಉಪಾಧಿಕರು. ನಿರುಪಾಧಿಕರು ಎಮ್ಮ ಮಹಾಸದ್ಭಕ್ತರು ತನು ಮನ ಧನವನರ್ಪಿಸಿ ಉಂಡು ಉಣಿಸಿ ಆಡಿ ಹಾಡಿ ಸುಖಿಯಾದರು ಶರಣರು. ಇಂತಹ ಶರಣಭರಿತ ಸದಾಶಿವಮೂರ್ತಿ ಮಹಾಸದ್ಗುರುವೇ ಭಕ್ತಿಯಲ್ಲಿ ಗುರು ಕಾಣಿರೆ. ಜ್ಞಾನದಲ್ಲಿ ಗುರುವೇ? ನೀವೆಲ್ಲರು ದೇವದಾನವ ಮಾನವರು ಅಜ್ಞಾನಿಗಳು. ಜ್ಞಾತೃ ಜ್ಞಾನ ಜ್ಞೇಯವಪ್ಪ ಪರಶಿವಲಿಂಗವನರಿಯದೆ ಅಹಂಕಾರದಿಂ ಲಘುವಾದಿರಿ. ಪರಧನ ಪರಸ್ತ್ರೀ ಪರಕ್ಷೇತ್ರಕ್ಕೆ ಆಸೆಮಾಡಿ ಲಘುವಾದಿರಿ ನಿರಾಶಸಂಪೂರ್ಣರು ಶಿವಜ್ಞಾನಸಂಪನ್ನರು ಎಮ್ಮ ಮಾಹೇಶ್ವರರು ಇಂತಹ ಮಾಹೇಶ್ವರರಿಂಗೆ ಶಿವಜ್ಞಾನವ ಕರುಣಿಸುವ ಎಮ್ಮ ಪರಶಿವಮೂರ್ತಿ ಮಹಾಸದ್ಗುರುವೇ ಗುರು ಕಾಣಿರೆ. ವೈರಾಗ್ಯದಲ್ಲಿ ಗುರುವೆ? ನೀವು ಆಶಾಬದ್ಧರು, ನಿರಾಶಾಸಂಪೂರ್ಣರು ಎಮ್ಮ ಸದ್ಭಕ್ತರು. ಇಂತಹ ಭಕ್ತದೇಹಿಕನಪ್ಪ ದೇವ ಎಮ್ಮ ಪರಶಿವಮೂರ್ತಿ ಮಹಾಸದ್ಗುರುವೇ ವೈರಾಗ್ಯದಲ್ಲಿ ಗುರು ಕಾಣಿರೆ. ಇದು ಕಾರಣ, ನಿತ್ಯದಲ್ಲಿ, ಸತ್ಯದಲ್ಲಿ, ಅಷ್ಟಮಹದೈಶ್ವರ್ಯದಲ್ಲಿ ದೀಕ್ಷೆಯಲ್ಲಿ, ಸ್ವಾನುಭಾವದಲ್ಲಿ, ಜ್ಞಾನದಲ್ಲಿ ವಿದ್ಯೆಯಲ್ಲಿ, ಬುದ್ಧಿಯಲ್ಲಿ, ವೈರಾಗ್ಯದಲ್ಲಿ, ಮಾತಾಪಿತರಲ್ಲಿ ಉಪಮಾತೀತನಪ್ಪ ಎಮ್ಮ ಪರಶಿವಮೂರ್ತಿ ಮಹಾಸದ್ಗುರುವೇ ಗುರು ಕಾಣಿರೆ. `ನಾಸ್ತಿ ತತ್ತ್ವಂ ಗುರೋಃ ಪರಂ' ಎಂದುದಾಗಿ, ಮಹಾಘನತರವಪ್ಪ ಪರಶಿವಮೂರ್ತಿ ಮಹಾಸದ್ಗುರುವೇ ಗುರು ಕಾಣಿರೆ. ಲಲಾಟಲೋಚನಂ ಚಾಂದ್ರೀಂ ಕಲಾಮಪಿ ಚ ದೋದ್ರ್ವಯಂ ಅಂತರ್ನಿಧಾಯ ವರ್ತೇ[s]ಹಂ ಗುರುರೂಪೋ ಮಹೇಶ್ವರಿ ಎಂದುದಾಗಿ ಪರಶಿವನೇ ಗುರು, ಶ್ರೀಗುರುವೇ ಪರಶಿವನು. ಇಂತಹ ಮಹಾಸದ್ಗುರುವಪ್ಪ ಪರಶಿವಮೂರ್ತಿ ಕಾರುಣ್ಯವ ಮಾಡಿ, ಸದ್ಭಕ್ತಿಪದವ ತೋರಿದ ಎಮ್ಮ ಗಣನಾಥದೇವರೇ ಗುರು ಕಾಣಿರೆ. ಇದು ಕಾರಣ, ಶರಣಮೂರ್ತಿ ಶ್ರೀಗುರು. ಶ್ರೀಗುರು ಲಿಂಗ ಜಂಗಮ ಒಂದೆಯಾಗಿ ಶ್ರೀಗುರುವೇ ಗುರು, ಉಳಿದದ್ದೆಲ್ಲಾ ಲಘು. ಪರಶಿವಲಿಂಗವೇ ಗುರು, ಉಳಿದವೆಲ್ಲವೂ ಲಘು. ಜಂಗಮವೇ ಗುರು, ಉಳಿದವೆಲ್ಲವೂ ಲಘು. ಇದನರಿದು ಶ್ರೀಗುರುವನೇ ನಂಬುವುದು. ತನು ಮನ ಧನವನರ್ಪಿಸುವುದು, ನಿರ್ವಂಚಕನಾಗಿ ನಿರುಪಾಧಿಕನಾಗಿ ನಿರಾಶಾಸಂಪೂರ್ಣನಾಗಿ, ಧ್ಯಾನಿಸಿ ಪೂಜಿಸಿ ಸದ್ಭಕ್ತಿಯಿಂ ವರ್ತಿಸಿ ಪ್ರಸಾದವ ಪಡೆದು ಮುಕ್ತನಪ್ಪುದಯ್ಯಾ ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರ.
--------------
ಉರಿಲಿಂಗಪೆದ್ದಿ
ಜಂಗಮಭಕ್ತಿಯ ಮಾಡಿಹೆನೆಂದು ಮಹಾಮನೆಯ ಕಟ್ಟಿದ ಮತ್ತೆ, ಹಗೆ ಕಪಟವಂ ತಾಳ್ದು, ಶಿವರೂಪಿನಲ್ಲಿ ಬಂದು ಇರಿದಡೆ, ಅಂಗವ ಕೊಡದಿದ್ದಡೆ ಭಕ್ತಂಗದೆ ಭಂಗ. ಕಪಟದಿಂದ ಸತಿಯ ಹಿಡಿದಡೆ, ಗದಕದಲ್ಲಿದ್ದೇನೆಂದಡೆ, ತನ್ನ ಸತ್ಯಕ್ಕೆ ಭಂಗ. ಆಶೆಯಿಂದ ಬಂದು, ವೇಷವ ತಾಳಿ, ರಾಶಿಯ ಹೊನ್ನ ಬೇಡಿದಡೆ, ಮನದಲ್ಲಿ ಆಶೆದೋರಿದಡೆ, ತಾ ಪೂಜಿಸುವ ಈಶ್ವರಂಗೆ ಭಂಗ. ಇದಿರಾಶೆಯ ಬಿಡದೆ ಮಾಡುವನ ಭಕ್ತಿ, ಕೂಸು ಸತ್ತು ಹೇತದ ನಾತ ಬಿಡದಂತೆ, ಅವರಿಗೇತಕ್ಕೊಲಿವ, ನಿಃಕಳಂಕ ಮಲ್ಲಿಕಾರ್ಜುನಾ.
--------------
ಮೋಳಿಗೆ ಮಾರಯ್ಯ
ಮೂರು ಕೋಲ ಬ್ರಹ್ಮಂಗೆ ಅಳದು ಕೊಟ್ಟೆ; ನಾಲ್ಕು ಕೋಲ ವಿಷ್ಣುವಿಂಗೆ ಆಳದು ಕೊಟ್ಟೆ; ಐದು ಕೋಲ ರುದ್ರಂಗೆ ಅಳದು ಕೊಟ್ಟೆ; ಆರು ಕೋಲ ಈಶ್ವರಂಗೆ ಅಳದು ಕೊಟ್ಟೆ; ಒಂದು ಕೋಲ ಸದಾಶಿವಂಗೆ ಅಳದು ಕೊಟ್ಟೆ. ಇಂತೀ ಐವರು ಕೋಲಿನ ಒಳಗು ಹೊರಗಿನಲ್ಲಿ ಅಳಲುತ್ತ ಬಳಲುತ್ತ ಒಳಗಾದರು. ಇಂತೀ ಒಳ ಹೊರಗ ಸೋಧಿಸಿಕೊಂಡು ಅಳಿವು ಉಳಿವಿನ ವಿವರವನರಿಯಬೇಕು, ಧಾರೇಶ್ವರಲಿಂಗವನರಿವುದಕ್ಕೆ.
--------------
ಕಾಮಾಟದ ಭೀಮಣ್ಣ
ಈಶ! ನಿಮ್ಮ ಪೂಜಿಸಿದ ಬಳಿಕ ಅನ್ಯ ದೈವಂಗಳಿಗೆ ಹೇಸಲೇ ಬೇಕು. ಹೇಸದೆ ಅನ್ಯದೈವಕ್ಕೆ ಆಸೆ ಮಾಡಿದಡೆ ಅವ ನಮ್ಮ ಈಶ್ವರಂಗೆ ಹೊರಗು. ದೋಷರಹಿತ ಭಕ್ತರು ಅವಂಗೆ ಕುಲವೆಂದು ಕೂಸ ಕೊಟ್ಟು ಕೂಡುಂಡಡೆ ಮೀಸಲ ಬೋನವ ನಾಯಿ ಮುಟ್ಟಿದಂತೆ ಕಾಣಾ!ರಾಮನಾಥ.
--------------
ಜೇಡರ ದಾಸಿಮಯ್ಯ
ಮಹಾಮೇರುವೆಂಬ ಪಟ್ಟಣದರಸಂಗೆ ಮೂರು ಪ್ರಧಾನಿಗಳು, ಆರು ಮಂದಿ ವಜೀರರು, ಮೂವತ್ತಾರು ಮಂದಿ ಸರದಾರರು, ಐವತ್ತೆರಡು ಮಂದಿ ಮಹಾಲದಾರರು ಕೂಡಿ ಕತ್ತಲ ಕಾಳಂಧವೆಂಬ ದೇಶವನು ಕಾಳಗವ ಮಾಡಿ ತಕ್ಕೊಂಬುವುದ ಕಂಡೆನಯ್ಯ. ಅದು ಹೇಗೆಂದಡೆ: ಹತ್ತುಲಕ್ಷ ರಾವುತರ ಹಿಡಿದು, ಎಂಟು ಸಾವಿರ ಕುದುರೆಗಳ ಹಿಡಿದು, ಅರವತ್ತು ಕೋಟಿ ಕಾಲಮಂದಿಯ ಸಂದಿಸಂದಿನಲ್ಲಿ ನಿಲಿಸಿ, ಸಪ್ತೇಳುಸಾಗರವ ದಾಂಟಿ, ಕತ್ತಲಕಾಳಂಧವೆಂಬ ದೇಶವನು, ಕೈಸೆರೆಯ ಮಾಡಿಕೊಂಡು, ಐದು ಠಾಣ್ಯವ ಬಲಿದು, ಕಡೆಯ ಠಾಣ್ಯದ ಮುಂದೆ ಚಾವಡಿಯ ರಚಿಸುವುದ ಕಂಡೆನಯ್ಯ. ಅದು ಹೇಗೆಂದಡೆ: ಅದಕೆ ಕಂಬ ಒಂದು, ತೊಲೆ ಮೂರು, ಆರು ಜಂತಿಗಳು, ಮೂವತ್ತಾರು ನೆಲೆಗಳ ಹೂಡಿ. ಒಂಬತ್ತು ಬಾಗಿಲಲ್ಲಿ ನವ ಬೊಂಬೆಗಳ ನಿಲಿಸಿ, ಅವಕ್ಕೆ ನವರತ್ನವ ಕೆತ್ತಿಸಿ, ಐದು ತೊಂಡಲಂಗಳ ಕಟ್ಟಿ, ಹವಳ ನೀಲ ರತ್ನ ಧವಳ ಮುತ್ತು ಮಾಣಿಕ್ಯದ ಗದ್ದುಗೆಯ ಮೇಲೆ ಆ ಅರಸನ ಮೂರ್ತಂಗೊಳಿಸಿ, ಸಪ್ತದ್ವೀಪಂಗಳಂ ರಚಿಸಿ, ಸೋಮವೀದಿ ಸೂರ್ಯವೀದಿಯ ಶೃಂಗಾರವ ಮಾಡಿ, ಆ ಅರಸಿಂಗೆ ಒಡ್ಡೋಲಗವಂ ಮಾಡುವುದ ಕಂಡೆನಯ್ಯ. ಅದು ಹೇಗೆಂದಡೆ: ಪಾತಾಳಲೋಕವೆಂಬ ಠಾಣ್ಯದಲ್ಲಿ ತಾಳ, ಕಂಸಾಳ, ಘಂಟೆ, ಜಾಗಟೆ ಮೊದಲಾದ ಶಬ್ದಂಗಳು, ಮತ್ರ್ಯಲೋಕವೆಂಬ ಠಾಣ್ಯದಲ್ಲಿ ಕಿನ್ನರವೇಣು ತಂಬೂರವೇಣು ಕೈಲಾಸವೇಣುಗಳು ಮೊದಲಾದ ಶಬ್ದಗಳು, ಸ್ವರ್ಗಲೋಕವೆಂಬ ಠಾಣ್ಯದಲ್ಲಿ ಭೇರಿ ಡಮರು ತುಡುಮೆ ಡಿಂಡಿಮ ಮೊದಲಾದ ಶಬ್ದಂಗಳು, ತತ್ಪುರುಷವೆಂಬ ಲೋಕದಲ್ಲಿ, ಕೊಳಲು ನಾಗಸ್ವರ ಶಂಖ ಸನಾಯ ಬುರುಗು ನಪಿರಿ ಹೆಗ್ಗಾಳೆ ಚಿನಿಗಾಳೆ ಚಂದ್ರಗಾಳೆ ಮೊದಲಾದ ಶಬ್ದಂಗಳು, ಈಶಾನ್ಯಲೋಕವೆಂಬ ಠಾಣ್ಯದಲ್ಲಿ ಗೀತಪ್ರಬಂಧ ರಾಗಭೇದ ಮೊದಲಾದ ಶಬ್ದಂಗಳು, ಇಂತಿವು ಆ ಅರಸಿಂಗೆ ಒಡ್ಡೋಲಗವ ಮಾಡುವುದ ಕಂಡೆನಯ್ಯ. ಬ್ರಹ್ಮಂಗೆ ತಾಳ, ವಿಷ್ಣುವಿಂಗೆ ವೇಣು, ರುದ್ರಂಗೆ ಮೃದಂಗ, ಈಶ್ವರಂಗೆ ಉಪಾಂಗ, ಸದಾಶಿವಂಗೆ ಗಾಯನ- ಇಂತೀ ಐವರು ಆ ಅರಸಿಂಗೆ ಗಂಧರ್ವರಾಗಿರ್ಪರು ನೋಡಾ. ಆದಿಶಕ್ತಿ ಮಂತ್ರಶಕ್ತಿ ಕ್ರಿಯಾಶಕ್ತಿ ಇಚ್ಫಾಶಕ್ತಿ ಜ್ಞಾನಶಕ್ತಿ ಇಂತೈವರು ನಾಂಟ್ಯವನಾಡುತಿರ್ಪರು ನೋಡಾ. ಒಬ್ಬ ಸತಿಯಳು ಆ ಅರಸಿಂಗೆ ಸಜ್ಜನವೆಂಬ ಮಜ್ಜನವ ನೀಡಿ, ಅಂತರಂಗದ ಬೆಳಗಿನ ಮಹಾಚಿದ್ವಿಭೂತಿಯಂ ಧರಿಸಿ, ನಿರ್ಮಲವೆಂಬ ಗಂಧವನೊರೆದು, ಸುಜ್ಞಾನವೆಂಬ ಅಕ್ಷತೆಯನಿಟ್ಟು, ನಿರ್ಭಾವವೆಂಬ ಪತ್ರಿಯನೇರಿಸಿ, ನಿದ್ರ್ವಂದ್ವವೆಂಬ ಧೂಪವ ತೋರಿ, ಭಕ್ತನೆಂಬ ಅಡ್ಡಣಿಗೆಯ ಮೇಲೆ, ಮಹೇಶ್ವರನೆಂಬ ಹರಿವಾಣವನಿಕ್ಕಿ, ಮಹಾಪ್ರಸಾದವ ನೆಲೆಯಂಗೊಂಡು, ಪ್ರಾಣಲಿಂಗಿಯೆಂಬ ತುಪ್ಪವನೆರೆದು, ಶರಣನೆಂಬ ಸಕ್ಕರೆಯ ತಳೆದು, ಆ ಅರಸಿಂಗೆ ನೈವೇದ್ಯವ ಮಾಡುತಿರ್ಪಳು ನೋಡಾ. ನವರತ್ನದ ಹರಿವಾಣದೊಳಗೆ ಪಂಚಾರ್ತಿಯ ಮೇಲೆ ಏಕಾರ್ತಿಯನಿಕ್ಕಿ ಪಂಚದೀಪಂಗಳ ರಚಿಸಿ, ಆ ಅರಸಿಂಗೆ ಓಂ ನಮೋ ಓಂ ನಮೋ ಎಂದು ಬೆಳಗುತಿರ್ಪಳು ನೋಡಾ ಝೇಂಕಾರ ನಿಜಲಿಂಗಪ್ರಭುವೆ.
--------------
ಜಕ್ಕಣಯ್ಯ
ಕಕ್ಷೆಯಲ್ಲಿ ಲಿಂಗವ ಧರಿಸಿಕೊಂಡಾತ ಬ್ರಹ್ಮ. ಕರಸ್ಥಲದಲ್ಲಿ ಲಿಂಗವ ಧರಿಸಿಕೊಂಡಾತ ವಿಷ್ಣು. ಕಂಠದಲ್ಲಿ ಲಿಂಗವ ಧರಿಸಿಕೊಂಡಾತ ರುದ್ರ. ಉರಸೆಜ್ಜೆಯಲ್ಲಿ ಲಿಂಗವ ಧರಿಸಿಕೊಂಡಾತ ಈಶ್ವರ. ಉತ್ತಮಾಂಗದಲ್ಲಿ ಲಿಂಗವ ಧರಿಸಿಕೊಂಡಾತ ಸದಾಶಿವ. ಆಮಳೋಕ್ಯದಲ್ಲಿ ಲಿಂಗವ ಧರಿಸಿಕೊಂಡಾತ ಪರಮೇಶ್ವರ. ಬ್ರಹ್ಮಂಗೆ ಪೀತವರ್ಣದ ಲಿಂಗ, ವಿಷ್ಣುವಿಂಗೆ ನೀಲವರ್ಣದ ಲಿಂಗ, ರುದ್ರಂಗೆ ಕಪಿಲವರ್ಣದ ಲಿಂಗ, ಈಶ್ವರಂಗೆ ಮಾಂಜಿಷ್ಟವರ್ಣದ ಲಿಂಗ, ಸದಾಶಿವಂಗೆ ಮಾಣಿಕ್ಯವರ್ಣದ ಲಿಂಗ, ಪರಮೇಶ್ವರಂಗೆ ಸ್ಫಟಿಕವರ್ಣದ ಲಿಂಗ. ಬ್ರಹ್ಮ ಪಾಶುಪತಿಯಾಗಿ ಸುಳಿದ, ವಿಷ್ಣು ಜೋಗಿಯಾಗಿ ಸುಳಿದ, ರುದ್ರ ಶ್ರವಣನಾಗಿ ಸುಳಿದ, ಈಶ್ವರ ಸನ್ಯಾಸಿಯಾಗಿ ಸುಳಿದ, ಸದಾಶಿವ ಯೋಗಿಯಾಗಿ ಸುಳಿದ, ಪರಮೇಶ್ವರ ಕಾಳಾಮುಖಿಯಾಗಿ ಸುಳಿದ. ಬ್ರಹ್ಮಂಗೆ ಕಾವಿ ಬಿಳಿದು, ವಿಷ್ಣುವಿಂಗೆ ಪೀತಸಕಲಾತಿ, ರುದ್ರಂಗೆ ಕಾಗು ಕಂಬಳಿ, ಈಶ್ವರಂಗೆ ಮೃಗಾಜಿನ ಕಾವಿಕಪ್ಪಡ, ಸದಾಶಿವಂಗೆ ಪುಲಿಚರ್ಮ ರತ್ನಗಂಬಳಿ, ಪರಮೇಶ್ವರಂಗೆ ಮೇಕೆಚರ್ಮ ಸಿತಕಪ್ಪಡ. ಬ್ರಹ್ಮ ಸ್ಥೂಲನೆಂದು, ವಿಷ್ಣು ಸೂಕ್ಷ್ಮನೆಂದು, ರುದ್ರ ಕಾರಣನೆಂದು, ಈಶ್ವರ ಸಕಲನೆಂದು, ಸದಾಶಿವ ನಿಃಕಲನೆಂದು, ಪರಮೇಶ್ವರ ಶೂನ್ಯನೆಂದು. ಬ್ರಹ್ಮಂಗೆ `ನ'ಕಾರ, ವಿಷ್ಣುವಿಂಗೆ `ಮ'ಕಾರ, ರುದ್ರಂಗೆ `ಶಿ'ಕಾರ, ಈಶ್ವರಂಗೆ `ವ'ಕಾರ, ಸದಾಶಿವಂಗೆ `ಯ'ಕಾರ, ಪರಮೇಶ್ವರಂಗೆ `ಓಂ' ಕಾರ. ಬ್ರಹ್ಮಂಗೆ ಭಕ್ತಸ್ಥಲ, ವಿಷ್ಣುವಿಂಗೆ ಮಹೇಶ್ವರಸ್ಥಲ, ರುದ್ರಂಗೆ ಪ್ರಸಾದಿಸ್ಥಲ, ಈಶ್ವರಂಗೆ ಪ್ರಾಣಲಿಂಗಿಸ್ಥಲ, ಸದಾಶಿವಂಗೆ ಶರಣಸ್ಥಲ, ಪರಮೇಶ್ವರಂಗೆ ಐಕ್ಯಸ್ಥಲ. ಇಂತಪ್ಪ ಶೈವಲಿಂಗದ ಭಕ್ತಿಯು, ಷಡುಸ್ಥಲದ ಸುಳುಹಿನೊಳಗಲ್ಲ. ರೇವಣಸಿದ್ಧಯ್ಯದೇವರು ಸಾಕ್ಷಿಯಾಗಿ ಪ್ರಭುದೇವರ ವಿರಶೈವ ಲಿಂಗ ಜಂಗಮದ ಷಡುಸ್ಥಲ ಸುಳುಹು ಆ ಭೇದವ ಕೂಡಲಚೆನ್ನಸಂಗಯ್ಯನಲ್ಲಿ ಕಾಣಾ, ಸಿದ್ಧರಾಮಯ್ಯಾ.
--------------
ಚನ್ನಬಸವಣ್ಣ
ಸಹಸ್ರದಳಕಮಲಮಂಟಪದಲ್ಲಿ ಓಂಯೆಂಬ ತಾಯಿ ಒಬ್ಬ ಮಗನ ಹಡೆದು ಸಾಕಿ ಸಲುಹಿ ತನ್ನಂತೆ ಮಾಡಿಕೊಂಡು ತತ್ಪುರುಷಲೋಕದಲ್ಲಿರುವ ಈಶ್ವರನ ಮಗಳ ತಕ್ಕೊಂಡು, ನಿಟಿಲವೆಂಬ ಹಸೆಯಜಗುಲಿಯ ಮೇಲೆ ಮದಲಿಂಗ ಮೊದಲಗಿತ್ತಿಯ ಕುಳ್ಳಿರಿಸಿ, ಅಂತಃಕರಣಚತುಷ್ಟಯಂಗಳೆಂಬ ನಾಲ್ಕು ಕಂಬವ ನಿಲ್ಲಿಸಿ, ಮಹಾಜ್ಞಾನವೆಂಬ ಹಂದರವ ಹೊಂದಿಸಿ, ಪ್ರಾಣಾಪಾನ ವ್ಯಾನ ಉದಾನ ಸಮಾನ ನಾಗ ಕೂರ್ಮ ಕ್ರಕರ ದೇವದತ್ತ ಧನಂಜಯಯೆಂಬ ಹತ್ತು ತೋರಣವ ಕಟ್ಟಿ, ಚಂದ್ರ ಸೂರ್ಯರೆಂಬ ದೀವಿಗೆಯ ಮುಟ್ಟಿಸಿ, ಪಾತಾಳಲೋಕದಲ್ಲಿರ್ಪ ಭಕ್ತನ ಕರೆಸಿ, ಮತ್ರ್ಯಲೋಕದಲ್ಲಿರ್ಪ ಮಹೇಶ್ವರನ ಕರೆಸಿ, ಸ್ವರ್ಗಲೋಕದಲ್ಲಿರ್ಪ ಪ್ರಸಾದಿಯ ಕರೆಸಿ, ತತ್ಪುರುಷಲೋಕದಲ್ಲಿರ್ಪ ಪ್ರಾಣಲಿಂಗಿಯ ಕರೆಸಿ, ಈಶಾನ್ಯಲೋಕದಲ್ಲಿರ್ಪ ಶರಣನ ಕರೆಸಿ, ಈ ಪಂಚಮೂರ್ತಿಗಳಂ ಮಜ್ಜನಂಗೈಸಿ ಕುಳ್ಳಿರ್ದರು ನೋಡಾ ! ಬ್ರಹ್ಮಂಗೆ ತಾಳ, ವಿಷ್ಣುವಿಂಗೆ ವೀಣೆ, ರುದ್ರಂಗೆ ಮೃದಂಗ, ಈಶ್ವರಂಗೆ ಶಂಖ, ಸದಾಶಿವಂಗೆ ಘಂಟೆ, ಈ ಪಂಚಮೂರ್ತಿಗಳು ನಾದವಾಲಗವಂ ಮಾಡುತಿಪ್ಪರು ನೋಡಾ ! ಆದಿಶಕ್ತಿ ಮಂತ್ರಶಕ್ತಿ ಕ್ರಿಯಾಶಕ್ತಿ ಇಚ್ಫಾಶಕ್ತಿ ಜ್ಞಾನಶಕ್ತಿ ಈ ಐವರು ನಾಂಟ್ಯವನಾಡುತ್ತಿಪ್ಪರು ನೋಡಾ ! ನಿಷ್ಪತಿಯೆಂಬ ಬಸವಣ್ಣನ ಮೇಲೆ ಮದಲಿಂಗ ಮೊದಲಗಿತ್ತಿಯ ಕುಳ್ಳಿರಿಸಿ, ಸೋಮಬೀದಿ ಸೂರ್ಯಬೀದಿಯಲ್ಲಿ ಮೆರವಣಿಗೆಯಂ ಮಾಡಿ, ಕ್ರಿಯಾಶಕ್ತಿ ಜ್ಞಾನಶಕ್ತಿ ಇಚ್ಫಾಶಕ್ತಿ ಆದಿಶಕ್ತಿ ಪರಾಶಕ್ತಿ ಈ ಐವರು ನವರತ್ನದ ಹರಿವಾಣಗಳಲ್ಲಿ ಪಂಚಾರ್ತಿಯ ಮೇಲೆ ಏಕಾರ್ತಿಯನಿಕ್ಕಿ ಸಪ್ತದೀಪಂಗಳ ರಚಿಸಿ ಓಂ ನಮೋ ಓಂ ನಮೋ ಶಿವಾಯಯೆಂದು ಬೆಳಗುತಿರ್ಪರು ನೋಡಾ ಝೇಂಕಾರ ನಿಜಲಿಂಗಪ್ರಭುವೆ.
--------------
ಜಕ್ಕಣಯ್ಯ
ಪೂರ್ವದಲ್ಲಿ ಓಂಕಾರವೆಂಬ ಲಿಂಗದ ಸಂಗದಿಂದ ಪ್ರಣವವೆ ಆದಿಯಾಯಿತ್ತು ನೋಡಾ. ಆ ಆದಿಯ ಸಂಗದಿಂದ ಒಬ್ಬ ಶಿವನಾದ. ಆ ಶಿವನ ಸಂಗದಿಂದ ಈಶ್ವರನಾದ. ಆ ಈಶ್ವರನ ಸಂಗದಿಂದ ರುದ್ರನಾದ. ಆ ರುದ್ರನ ಸಂಗದಿಂದ ವಿಷ್ಣುವಾದ. ಆ ವಿಷ್ಣುವಿನ ಸಂಗದಿಂದ ಬ್ರಹ್ಮನಾದ. ಬ್ರಹ್ಮಂಗೆ ಸರಸ್ವತಿಯಾದಳು, ವಿಷ್ಣುವಿಂಗೆ ಲಕ್ಷ್ಮಿಯಾದಳು, ರುದ್ರಂಗೆ ಕ್ರಿಯಾಶಕ್ತಿಯಾದಳು, ಈಶ್ವರಂಗೆ ಸ್ವಯಂಭೂಶಕ್ತಿಯಾದಳು, ಸದಾಶಿವಂಗೆ ಜ್ಞಾನಶಕ್ತಿಯಾದಳು. ಈ ಐವರ ಸಂಗದಿಂದ ನರರು ಸುರರು ದೇವಾದಿದೇವರ್ಕಳು ಕಿನ್ನರಕಿಂಪುರುಷರು ಗರುಡಗಂಧರ್ವರು ಹುಟ್ಟಿದರು ನೋಡಾ ಝೇಂಕಾರ ನಿಜಲಿಂಗಪ್ರಭುವೆ.
--------------
ಜಕ್ಕಣಯ್ಯ
ಆರುಲಿಂಗದಲ್ಲಿ ಅರಿದಿಹೆನೆಂಬ ಆರುಹುಗೇಡಿಗಳು ನೀವು ಕೇಳಿರೊ ! ಆರುಲಿಂಗ ನಿಮಗೆಲ್ಲಿಹವು ? ಅದೆಂತೆಂದಡೆ:ಆಚಾರಲಿಂಗ ಬ್ರಹ್ಮಂಗೆ ಸಂಬಂಧ, ಗುರುಲಿಂಗ ವಿಷ್ಣುವಿಂಗೆ ಸಂಬಂಧ, ಶಿವಲಿಂಗ ರುದ್ರಂಗೆ ಸಂಬಂಧ, ಜಂಗಮಲಿಂಗ ಈಶ್ವರಂಗೆ ಸಂಬಂಧ, ಪ್ರಸಾದಲಿಂಗ ಸದಾಶಿವಂಗೆ ಸಂಬಂಧ, ಮಹಾಲಿಂಗ ಪರಶಿವಂಗೆ ಸಂಬಂಧ, ಇಂತಾರುಲಿಂಗ ಆರುದರುಶನಕ್ಕೆ ಸಂಬಂಧ. ನಿಮ್ಮ ಸಂಬಂಧವ ನೀವು ಬಲ್ಲಿರೆ ಹೇಳಿರೊ ! ಅರಿಯದಿರ್ದಡೆ ಕೇಳಿರೊ ! ಗುರುಲಿಂಗ ಜಂಗಮವೆಂಬ ತ್ರಿವಿಧ ಸಂಬಂಧವ ತಿಳಿದು ! ಆರು ಪರಿಯ ಶಿಲೆಯಂ ಮೆಟ್ಟಿ ! ಮೂರುಬಾಗಿಲ ತೆರೆದು ! ಶ್ರೀ ಗುರುವಿನ ಪ್ರಸಾದವ ಸವಿದು ! ಮುಂದಿರ್ದ ಲಿಂಗಸಂಗವ ಮಾಡಿ ! ಆ ಪ್ರಥಮಶಿವನೆಂಬ ಜಂಗಮವ ನೋಡುತ್ತಾ ನೋಡುತ್ತಾ ನಿಬ್ಬೆರಗಾಗಬೇಕು ! ಇದು ಕಾರಣ ಆರುಮೂರುಗಳೆಂಬ ಮರವೆಯ ಹರಿದು, ತಟ್ಟುಮುಟ್ಟುಗಳೆಂಬ ಭ್ರಮೆಯ ಜರೆದು ! ಅಂಗಲಿಂಗವೆಂಬ ದ್ವಂದ್ವವ ಹಿಂಗಿ ನಿಸ್ಸಂಗಿಯಾಗಿರ್ದೆನಯ್ಯಾ ಗುಹೇಶ್ವರಾ !
--------------
ಅಲ್ಲಮಪ್ರಭುದೇವರು
ದಶನಾದಗಳು ಇಲ್ಲದಂದು, ಸುನಾದಗಳು ನೆಲೆಗೊಳ್ಳದಂದು, ಝೇಂಕಾರವು ಮೊನೆದೋರದಂದು, ಅತ್ತತ್ತಲೆ ನಿಶ್ಚಿಂತ ನಿರಾಕುಳನಾಗಿದ್ದನಯ್ಯ. ತನ್ನ ನೆನವಿನ ಮಂತ್ರದಲ್ಲಿ ಓಂಕಾರನೆಂಬ ಮೂರ್ತಿಯಾದನಯ್ಯ. ಆ ಓಂಕಾರನೆಂಬ ಮೂರ್ತಿಂಗೆ ಚಿಚ್ಫಕ್ತಿಯ ಸಂಬಂಧಿಸಿ ಧಾರೆಯನೆರೆದರಯ್ಯ. ಅವರಿಬ್ಬರಿಗೂ ಪರಶಿವನಾದ. ಆ ಪರಮಶಿವಂಗೆ ಪರಾಶಕ್ತಿಯ ಸಂಬಂಧಿಸಿ ಧಾರೆಯನೆರೆದರಯ್ಯ. ಅವರಿಬ್ಬರಿಗೂ ಸದಾಶಿವನಾದ, ಆ ಸದಾಶಿವಂಗೆ ಜ್ಞಾನಶಕ್ತಿಯ ಸಂಬಂಧಿಸಿ ಧಾರೆಯನೆರೆದರಯ್ಯ. ಅವರಿಬ್ಬರಿಗೂ ಈಶ್ವರನಾದ, ಆ ಈಶ್ವರಂಗೆ ಇಚ್ಫಾಶಕ್ತಿಯ ಸಂಬಂಧಿಸಿ ಧಾರೆಯನೆರೆದರಯ್ಯ. ಅವರಿಬ್ಬರಿಗೂ ರುದ್ರನಾದ, ಆ ರುದ್ರಂಗೆ ಕ್ರಿಯಾಶಕ್ತಿಯ ಸಂಬಂಧಿಸಿ ಧಾರೆಯನೆರೆದರಯ್ಯ. ಅವರಿಬ್ಬರಿಗೂ ವಿಷ್ಣುವಾದ, ಆ ವಿಷ್ಣುವಿಂಗೆ ಲಕ್ಷ್ಮಿಯ ಸಂಬಂಧಿಸಿ ಧಾರೆಯನೆರೆದರಯ್ಯ. ಅವರಿಬ್ಬರಿಗೂ ಬ್ರಹ್ಮನಾದ, ಆ ಬ್ರಹ್ಮಂಗೆ ಸರಸ್ವತಿಯ ಸಂಬಂಧಿಸಿ ಧಾರೆಯನೆರೆದರಯ್ಯ. ಅವರಿಬ್ಬರಿಗೂ ನರಲೋಕಾದಿ ಲೋಕಂಗಳು ಆದವು ನೋಡಾ ಝೇಂಕಾರ ನಿಜಲಿಂಗಪ್ರಭುವೆ.
--------------
ಜಕ್ಕಣಯ್ಯ
ಆದಿ ಅನಾದಿಯೆಂಬ (ಯೆಂಬುದ?) ಅಂತರಾತ್ಮನಲ್ಲಿ ತಿಳಿಯಲರಿಯದೆ ಆದಿ ದೈವವೆಂದು ಬರಿಯ ಬಹಿರಂಗದ ಬಳಕೆಯನೆ ಬಳಸಿ, ಅನ್ಯ ದೈವಂಗಳನಾರಾಧಿಸಿ ಕೆಡುತ್ತಿಪ್ಪರು ನೋಡಾ. ಅದಕೆ ತಪ್ಪೇನು, ಮಕ್ಕಳಿಗೆ ತಮ್ಮ ಮಾತೆಯೇ ದೈವ. ಮಾತೆಗೆ ತನ್ನ ಪುರುಷನೆ ದೈವ, ಪುರುಷಂಗೆ ತನ್ನ ಪ್ರಭುವೆ ದೈವ. ಪ್ರಭುವಿಗೆ ತನ್ನ ಪ್ರಧಾನನೆ ದೈವ, ಪ್ರಧಾನಂಗೆ ತನ್ನ ರಾಯನೆ ದೈವ. ರಾಯಂಗೆ ತನ್ನ ಲಕ್ಷ್ಮಿಯೆ ದೈವ, ಲಕ್ಷ್ಮಿಗೆ ತನ್ನ ವಿಷ್ಣುವೆ ದೈವ. ವಿಷ್ಣುವಿಗೆ ತನ್ನ ರುದ್ರನೆ ದೈವ, ಆ ರುದ್ರಂಗೆ ತನ್ನ ಈಶ್ವರನೆ ದೈವ. ಈಶ್ವರಂಗೆ ತನ್ನ ಸದಾಶಿವನೆ ದೈವ, ಸದಾಶಿವಂಗೆ ತನ್ನ ಸರ್ವಗತ ಶಿವನೆ ದೈವ. ಸರ್ವಗತ ಶಿವನಿಗೆ ಆಕಾಶಮಹಿಪತಿಯೆಂಬ ಮಹಾಲಿಂಗಕ್ಕೆ ಆದಿ ದೇವರುಳ್ಳಡೆ ಹೇಳಿರೆ, ಇಲ್ಲದಿರ್ದಡೆ ಸುಮ್ಮನೆ ಇರಿರೆ. ಇದು ಕಾರಣ ಷಡುದರುಶನದ ಚರಾಚರಾದಿಗಳೆಲ್ಲರೂ ತಮ ತಮಗಿಷ್ಟ ಕಾಮ್ಯವ ಕೊಡುವುದಕ್ಕೆ ವರವುಳ್ಳ ದೇವರೆಂದು ಬೆರವುತ್ತಿಹರು. ಅದಕ್ಕೆ ತಪ್ಪೇನು ಅವರಿಗಪ್ಪಂಥ, ವರವೀವುದಕ್ಕೆ ಸತ್ಯವುಳ್ಳವನಹುದು. ಆದಡೇನು, ಪ್ರಾಣಕ್ಕೆ ಪರಿಣಾಮವ ಕೊಡಲರಿಯವು. ಅವರ ಕೈಯಲ್ಲಿ ಆರಾಧಿಸಿಕೊಂಬ ದೈವಂಗಳೆಲ್ಲವು. ಪೃಥ್ವಿ ಅಪ್ಪು ತೇಜ ವಾಯು ಆಕಾಶ ಮನವೆಂಬಾರರ ಹಂಗಿನಲ್ಲಿ ಸಿಕ್ಕಿ, ವಿಭೂತಿಯನ್ನಿಟ್ಟು, ರುದ್ರಾಕ್ಷೆಯಂ ತೊಟ್ಟು ಜಪತಪ ಹೋಮ ನೇಮಂಗಳ ಮಾಡಿ ಮಾರಣ ಮೋಹನ ಸ್ತಂಭನ ಉಚ್ಚಾಟನ ಅಂಜನ ಸಿದ್ಧಿ, ಘುಟಿಕಾ ಸಿದ್ಧಿ, ಮಂತ್ರಸಿದ್ಧಿ, ದೂರದೃಷ್ಟಿ ದೂರ ಶ್ರವಣ, ಕಮಲದರ್ಶನ, ತ್ರಿಕಾಲಜ್ಞಾನ, ಪರಕಾಯಪ್ರವೇಶವೆಂಬ ಅಷ್ಟಮಹಾಸಿದ್ಧಿಗಳಂ ಲಿಂಗದಲ್ಲಿ ವರಂಬಡೆದು ತಮ್ಮ ಬೇಡಿದವರಿಗೆ ಕೊಟ್ಟು ತಮ್ಮಿಂದ ಹಿರಿಯರಿಗೆ ನಮಸ್ಕರಿಸಿ, ತಮ್ಮಿಂದ ಕಿರಿಯರಿಗೆ ದೇವರೆಂದು ಬೆರವುತ್ತಿಹರು. ಕಿರಿದುದಿನ ಅವರ ದೇವರೆನ್ನಬಹುದೆ ? ದೇಹಕೇಡಿಗಳ ಸತ್ಯರೆಂದೆನಬಹುದೆ ? ಅಸತ್ಯದಲ್ಲಿ ಅಳಿದವರ ಭಕ್ತರೆಂದೆನಬಹುದೆ ? ಬಹುರೂಪಿನ ಕಪಟಿಗಳ ನಿತ್ಯರೆನಬಹುದೆ ? ದಿನದಿನಕ್ಕೆ ಸತ್ತು ಸತ್ತು ಹುಟ್ಟುವವರ. ಅದೆಂತೆಂದಡೆ: ಬ್ರಹ್ಮನ ಜಾವವೊಂದಕ್ಕೆ ಒಬ್ಬ ಇಂದ್ರನಳಿವ ವಿಷ್ಣುವಿನ ಜಾವವೊಂದಕ್ಕೆ ಒಬ್ಬ ಬ್ರಹ್ಮನಳಿವ ರುದ್ರನ ಜಾವವೊಂದಕ್ಕೆ ಒಬ್ಬ ವಿಷ್ಣುವಳಿವ ಈಶ್ವರನ ಜಾವವೊಂದಕ್ಕೆ ಒಬ್ಬ ರುದ್ರನಳಿವ ಸದಾಶಿವನ ಜಾವವೊಂದಕ್ಕೆ ಒಬ್ಬ ಈಶ್ವರನಳಿವ ಸರ್ವಗತನ ಜಾವವೊಂದಕ್ಕೆ ಒಬ್ಬ ಸದಾಶಿವನಳಿವ ಲಿಂಗ ಶರಣರ ಒಂದು ನಿಮಿಷಕ್ಕೆ ಒಬ್ಬ ಸರ್ವಗತನಳಿವ ಲಿಂಗ ಶರಣರಿಗೆ ಅಳಿವುಳ್ಳಡೆ ಹೇಳಿರೆ ? ಇಲ್ಲದಿರ್ದಡೆ ಸುಮ್ಮನಿರಿರೆ. ಅಂತಪ್ಪ ಮಹಾಲಿಂಗವನು ಶರಣರನು ಅರಿಯದೆ ಷಡುದೇವತೆಗಳು ಮುಖ್ಯವಾದ ಮನು ಮುನಿ ದೇವ ದಾನವ ಮಾನವರೆಲ್ಲರೂ ಆರಿಸಿ ತೊಳಲಿ ಬಳಲುತ್ತಿಪ್ಪರು. ಅದು ಹೇಗೆಂದಡೆ: ಬ್ರಹ್ಮವೇದದಲ್ಲರಸುವನು. ವಿಷ್ಣು ಪೂಜೆಯಲ್ಲರಸುವನು. ರುದ್ರ ಜಪದಲ್ಲರಸುವನು. ಈಶ್ವರ ನಿತ್ಯನೇಮದಲ್ಲರಸುವನು. ಸದಾಶಿವನು ನಿತ್ಯ ಉಪಚಾರದಲ್ಲರಸುವನು. ಸರ್ವಗತ ಶೂನ್ಯದಲ್ಲರಸುವನು. ಗೌರಿ ತಪದಲ್ಲರಸುವಳು, ಗಂಗೆ ಉಗ್ರದಲ್ಲರಸುವಳು. ಚಂದ್ರ ಸೂರ್ಯರು ಹರಿದರಸುವರು. ಇಂದ್ರ ಮೊದಲಾದಷ್ಟದಿಕ್ಪಾಲಕರು ಆಗಮ್ಯದಲ್ಲರಸುವರು ಸಪ್ತ ಮಾತೃಕೆಯರು `ಓಂ ಪಟು ಸ್ವಾಹಾ' ಎಂಬ ಮಂತ್ರದಲ್ಲರಸುವರು. ಸತ್ಯಋಷಿ ದಧೀಚಿ ಗೌತಮ ವಶಿಷ* ವಾಲ್ಮೀಕಿ ಅಗಸ್ತ್ಯ ವಿಶ್ವಾಮಿತ್ರ ಇವರು ಮೊದಲಾದ ಸಪ್ತಋಷಿಯರುಗಳೆಲ್ಲಾ ತಪ, ಯೋಗ, ಆಗಮಂಗಳಲ್ಲಿ ಅರಸುವರು. ಇಂತಿವರೆಲ್ಲರಿಗೆಯೂ ಸಿಕ್ಕಿಯೂ ಸಿಕ್ಕದ ಘನವು ಶುಕ್ಲ ಶೋಣಿತವಿಲ್ಲದ ಕಾಮಿ, ಒಡಲಿಲ್ಲದ ರೂಪು, ತಲೆಯಿಲ್ಲದ ಗಜ, ಬಾಲವಿಲ್ಲದ ಸಿಂಹ, ನಿದ್ರೆಯಿಲ್ಲದ ನಿರಾಳ. ಇಂತೀ ಭೇದಮಂ ಭೇದಿಸಿ ನೋಡಬಲ್ಲಡೆ ಕಣ್ಣ ಮೇಲೆ ಕಣ್ಣುಂಟು. ಮತ್ತಾ ಕಣ್ಣ ತೆರೆದು ಅಮೃತಕಾಯದೃಷ್ಟಿಯಲ್ಲಿ ನೋಡಿದಡೊಂದೂಯಿಲ್ಲ. ನಮ್ಮ ಗುಹೇಶ್ವರ ಲಿಂಗವು ಬಚ್ಚಬರಿಯ ಬಯಲು ನಿಶ್ಚಿಂತ ನಿರಾಳನು
--------------
ಅಲ್ಲಮಪ್ರಭುದೇವರು
ವಾಗ್ರಚನೆಯೆಂಬುದು ಕರ್ಣಾಟವಯ್ಯಾ. ಆದ್ಯರಾಜ್ಞೆ ಎಂಬುದು ಈಶ್ವರಗೆ ಜ್ಯೋತಿಯಯ್ಯಾ. ಅಗಿದಗಿದು ನೋಡುವುದದು ಶುಕ ತೆಂಗು ತಿಂದಂತೆ ನೋಡಾ, ಕಪಿಲಸಿದ್ಧಮಲ್ಲಿಕಾರ್ಜುನಾ
--------------
ಸಿದ್ಧರಾಮೇಶ್ವರ
ಇನ್ನಷ್ಟು ... -->