ಅಥವಾ

ಒಟ್ಟು 48 ಕಡೆಗಳಲ್ಲಿ , 25 ವಚನಕಾರರು , 46 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಈಶ್ವರನ ಕಾಬುದೊಂದಾಸೆಯುಳ್ಳೊಡೆ ಪರದೇಶಕ್ಕೆ ಹೋಗಿ ಬಳಲದಿರು, ಕಾಶಿಯಲ್ಲಿ ಕಾಯವ ವಿನಾಶವ ಮಾಡಲುಬೇಡ. ನಿನ್ನಲ್ಲಿ ನೀ ತಿಳಿದು ನೋಡಾ, ಸರ್ವೇಶ ಮುಳ್ಳಗುತ್ತ ತೆರಹಿಲ್ಲೆಂದಡೆ, ಒಂದು ಗೋಂಟ ಸಾರಿರ್ದನೆ ? ಎಂದನಂಬಿಗ ಚೌಡಯ್ಯ.
--------------
ಅಂಬಿಗರ ಚೌಡಯ್ಯ
`ಸರ್ವಂ ಶಿವಮಯಂ ಜಗತ್' ಎಂಬುದ ತಿಳಿಯದೆ ನುಡಿದವರ ನುಡಿಯಂತೆ ನಡೆಯದಿರಾ ಮನವೆ. `ಸರ್ವಂ ಶಿವಮಯಂ ಜಗತ್' ಎಂದು ತಿಳಿದು ತಿಳಿದು ಸುಖಿಯಾಗು ಮನವೆ. ಪಿಂಡ ಬ್ರಹ್ಮಾಂಡಕ್ಕೆ `ತಿಲಷೋಡಶಭಾಗೇನ ಭೇದೋ ನಾಸ್ತಿ ವರಾನನೇ' ಎಂಬುದು ಪುಸಿಯಲ್ಲ ನೋಡಾ ಮನವೆ. ಈಶ್ವರನ ಪಂಚಮುಖಂದ ಪಂಚತತ್ವಗಳುದಯಿಸಿದವು. ಈ ತತ್ವಂಗಳೊಂದೊಂದು ಕೂಡಿ ತನ್ನ ಚೈತನ್ಯ ಬೆರಸಿದಲ್ಲಿ, ಪಿಂಡ ಬ್ರಹ್ಮಾಂಡವೆನಿಸಿತ್ತು ನೋಡಾ ಮನವೆ. ತನ್ನ ತಾನರಿದು ನೋಡಿದಡೆ, `ಸರ್ವಂ ಶಿವಕಪಿಲಸಿದ್ಧಮಲ್ಲಿಕಾರ್ಜುನಮಯಂ ಜಗತ್' ಎಂದರಿದು ಬಂದಿತ್ತು ನೋಡಾ ಮನವೆ.
--------------
ಸಿದ್ಧರಾಮೇಶ್ವರ
ಒಂದು, ಎರಡು, ಮೂರು, ನಾಲಕ್ಕು, ಅಯಿದು, ಆರು, ಏಳು, ಎಂಟು ಒಂಬತ್ತು, ಹತ್ತು, ಹನ್ನೊಂದು ಹನ್ನೆರಡು, ಹದಿಮೂರು, ಹದಿನಾಲಕ್ಕು, ಹದಿನೈದು, ಹದಿನಾರು, ಹದಿನೇಳು, ಹದಿನೆಂಟು, ಹತ್ತೊಂ¨ತ್ತು, ಇಪ್ಪತ್ತು, ಇಪ್ಪತ್ತೊಂದು, ಇಪ್ಪತ್ತೆರಡು, ಇಪ್ಪತ್ತಮೂರು, ಇಪ್ಪತ್ತನಾಲಕ್ಕು. ಇಪ್ಪತ್ತನಾಲಕ್ಕು ಎಂದರೆ ನೋಡಿದ್ದೇನಪ್ಪ, ಕೇಳಿದ್ದೇನಪ್ಪ ? ಇಪ್ಪತ್ತನಾಲಕ್ಕು ಎಂದರೆ ಚಕ್ರವರ್ತಿಗಳು. ಅದು ಎಂತೆಂದಡೆ: ಗ್ರಂಥ || ಯುದಿಷ್ಠಿರೋ ವಿಕ್ರ[ಮೋ]ಶಾಲಿವಾಹನ[ಃ] ತ[ಪಸಾ] ಧ್ರುವಶ್ಚ [ದಿವಿ]ಜರಾಜನಂದನಃ ನಾಗಾಂತಕೋ ಭೂಪತಿ [ಷಷ್ಠಮಃ] ಕಲಿಯುಗೇ ಷಟ್‍ಚಕ್ರವರ್ತಿ[ನಃ] ಈ ಆರು ಮಂದಿ ಕಲಿಯುಗದ ಚಕ್ರವರ್ತಿಗಳು. ಇಪ್ಪತ್ತಮೂರು ಎಂದರೆ ನೋಡಿದ್ದೇನಪ್ಪ, ಕೇಳಿದ್ದೇನಪ್ಪ ? ಇಪ್ಪತ್ತಮೂರು ಎಂದರೆ ಚಕ್ರವರ್ತಿಗಳು. ಅದು ಎಂತೆಂದಡೆ: ಗ್ರಂಥ || ಯಯಾತಿ ನಹುಷ[ಶ್ಶಂತನುಃ] ಚಿತ್ರವೀರ್ಯಶ್ಚ ಪಾಂಡವಃ ರಾಜಾ ದುರ್ಯೋಧನ[ಶ್ಚೈ]ವ ದ್ವಾಪರೇ ಷ[ಟ್] ಚಕ್ರವರ್ತಿ[ನಃ] ಆ ಆರು ಮಂದಿ ದ್ವಾಪರದ ಚಕ್ರವರ್ತಿಗಳು. ಇಪ್ಪತ್ತೆರಡು ಎಂದರೆ ನೋಡಿದ್ದೇನಪ್ಪ, ಕೇಳಿದ್ದೇನಪ್ಪ ? ಇಪ್ಪತ್ತೆರಡು ಎಂದರೆ ಚಕ್ರವರ್ತಿಗಳು. ಅದು ಎಂತೆಂದಡೆ: ಗ್ರಂಥ || ವೈವ[ಸ್ವ]ತೋ ದಿಲೀಪಶ್ಚ ರಘು ಚಕ್ರೇಶ್ವರೋ ಅ[ಜಃ] ದಶರಥೋ ರಾಮಚಂದ್ರ[ಶ್ಚ] ಷಡೈತೇ ಚಕ್ರವರ್ತಿ[ನಃ] ಈ ಆರು ಮಂದಿ ತ್ರೇತಾಯುಗದ ಚಕ್ರವರ್ತಿಗಳು. ಅದು ಎಂತೆಂದಡೆ: ಗ್ರಂಥ || ಹರಿಶ್ಚಂ[ದ್ರೋ] ನ[ಳ]ರಾಜ[ಃ] ಪುರುಕು[ತ್ಸ]ಶ್ಚ ಪುರೂರವಃ ಸಗರಃ ಕಾರ್ತವೀರ್ಯಶ್ಚ ಷಡೈತೇ ಚಕ್ರವರ್ತಿ[ನಃ] ಈ ಆರು ಮಂದಿ ಕೃತಯುಗದ ಚಕ್ರವರ್ತಿಗಳು. ಅಂತೂ ಇಪ್ಪತ್ತನಾಲ್ಕು ಮಂದಿ ಚಕ್ರವರ್ತಿಗಳು. ಇಪ್ಪತ್ತು ಎಂದರೆ ನೋಡಿದ್ದೇನಪ್ಪ, ಕೇಳಿದ್ದೇನಪ್ಪ ? ಇಪ್ಪತ್ತು ಎಂದರೆ ಪ್ರಪಂಚ ನಿರ್ಮಾಣ ಸಹಾಯ[ದ]ವರು. ಅದು ಎಂತೆಂದಡೆ: ಆಂಗೀರಸ, ಪುಲಸ್ತ್ಯ, ಪುಲಹ, ಶಾಂತ, ದಕ್ಷ, ವಸಿಷ್ಠ, ವಾಮದೇವ, ನವಬ್ರಹ್ಮ, ಕೌಶಿಕ, ಶೌನಕ, ಸ್ವಯಂಭು, ಸ್ವಾರೋಚಿಷ, ಉತ್ತಮ, ತಾಮಸ, ರೈವತ, ಚಾಕ್ಷಷ, ವೈವಸ್ವತ, ಸೂರ್ಯಸಾವರ್ಣಿ, ಚಂದ್ರಸಾವರ್ಣಿ, ಬ್ರಹ್ಮಸಾವರ್ಣಿ, ಇಂದ್ರ ಸಾವರ್ಣಿ ಇವರು ಇಪ್ಪತ್ತು ಮಂದಿ ಪ್ರಪಂಚ ನಿರ್ಮಾಣ ಸಹಾಯ[ದ]ವರು. ಹತ್ತೊಂಬತ್ತು ಎಂದರೆ ಪುಣ್ಯನದಿಗಳು. ಅದು ಎಂತೆಂದಡೆ: ಗ್ರಂಥ || ಗಂಗಾ ಪುಷ್ಕ[ರಿಣೀ] ನರ್ಮದಾ ಚ ಯಮುನಾ ಗೋದಾವರೀ ಗೋಮತೀ ಗಂಗಾದ್ವಾರ ಗಯಾ ಪ್ರಯಾಗ ಬದರೀ ವಾರಾಣಸೀ ಸೈಯಿಂಧವೀ ಇವು ಹತ್ತೊಂಬತ್ತು ಪುಣ್ಯನದಿಗಳು. ಹದಿನೆಂಟು ಎಂದರೆ ನೋಡಿದ್ದೇನಪ್ಪ, ಕೇಳಿದ್ದೇನಪ್ಪ ? ಹದಿನೆಂಟು ಎಂದರೆ.......... ಅದು ಎಂತೆಂದಡೆ: ........................... ಹದಿನೇಳು ಎಂದರೆ ನೋಡಿದ್ದೇನಪ್ಪ, ಕೇಳಿದ್ದೇನಪ್ಪ ? ಹದಿನೇಳು ಎಂದರೆ................. ಅದು ಎಂತೆಂದಡೆ: .................... ಹದಿನಾರು ಎಂದರೆ ನೋಡಿದ್ದೇನಪ್ಪ, ಕೇಳಿದ್ದೇನಪ್ಪ ? ಹದಿನಾರು ಎಂದರೆ [ಅ]ರಸುಗಳು ಅದು ಎಂತೆಂದಡೆ: ಗ್ರಂಥ || ಗಯಾಂಬರೀ[ಷ] ಶ[ಶ]ಬಿಂದುರಂಗದೋ ಪೃಥು[ರ್ಮ]ರು[ತ್] ಭರತ[ಸ್ಸು]ಹೋತ್ರಃ ರಾಮೋ ದಿಲೀಪೋ ಸಗರ ರಂತಿ ರಾಮ[ಃ] ಯಯಾತಿ ಮಾಂಧಾತ ಭಗೀರಥ[ಶ್ಚ] ಎಂದುದಾಗಿ, ಗಯ, ಅಂಬರೀಷ, ಶಶಬಿಂದು, ಪೃಥು, ಮರುತ್, ಭರತ, ಸುಹೋತ್ರ, ಪರಶುರಾಮ, ದಿಲೀಪ, ಸಗರ, ರಂತಿ, ರಾಮಚಂದ್ರ, ಯಯಾತಿ, ಮಾಂಧಾತ, ಭಗೀರಥ, ಅ[ಂಗದ] ಇವರು ಹದಿನಾರು ಮಂದಿ ಅರಸುಗಳು. ಹದಿನೈದು ಎಂದರೆ ನೋಡಿದ್ದೇನಪ್ಪ, ಕೇಳಿದ್ದೇನಪ್ಪ ? ಹದಿನೈದು ಎಂದರೆ ತಿಥಿಗಳು. ಅದು ಎಂತೆಂದಡೆ: ಪಾಡ್ಯ, ಬಿದಿಗೆ, ತದಿಗೆ, ಚವುತಿ, [ಪಂಚಮಿ], ಷಷ್ಠಿ, ಸಪ್ತಮಿ, ಅಷ್ಟಮಿ, ನವಮಿ, ದಶಮಿ, ಏಕಾದಶಿ, ದ್ವಾದಶಿ, ತ್ರಯೋದಶಿ, ಅಮಾವಾಸ್ಯೆ ಇವು ಹದಿನೈದು ತಿಥಿಗಳು. ಹದಿನಾಲಕ್ಕು ಎಂದರೆ ನೋಡಿದ್ದೇನಪ್ಪ, ಕೇಳಿದ್ದೇನಪ್ಪ ? ಹದಿನಾಲಕ್ಕು ಎಂದರೆ ಲೋಕಂಗಳು. ಅದು ಎಂತೆಂದಡೆ: ಅತಲ ವಿತಲ ಸುತಲ ತಲಾತಲ ಮಹಾತಲ ರಸಾತಲ ಪಾತಾಳ ಭೂಲೋಕ ಭುವರ್ಲೋಕ ಸುರ್ವರ್ಲೋಕ ಮಹರ್ಲೋಕ ತಪೋಲೋಕ ಜನೋಲೋಕ ಸತ್ಯಲೋಕ ಇವು ಹದಿನಾಲ್ಕು ಲೋಕಂಗಳು. ಹದಿಮೂರು ಎಂದರೆ ನೋಡಿದ್ದೇನಪ್ಪ, ಕೇಳಿದ್ದೆನಪ್ಪ ? ಹದಿಮೂರು ಎಂದರೆ ಚಕ್ರಂಗಳು. ಅದು ಎಂತೆಂದಡೆ, ಆಧಾರಚಕ್ರ, ಸ್ವಾಷ್ಠಾನಚಕ್ರ, ಮಣಿಪೂರಕಚಕ್ರ, ಅನಾಹಚಕ್ರ, ವಿಶುದ್ಧಿಚಕ್ರ, ಆಜ್ಞಾಚಕ್ರ, ಶಿಖಾಚಕ್ರ, ಬ್ರಹ್ಮಚಕ್ರ, ಘಟಚಕ್ರ, ಕಾಲಚಕ್ರ, ಮೇಘಚಕ್ರ, ಭೂಚಕ್ರ, ಅವಗಡಚಕ್ರ ಇವು ಹದಿಮೂರು ಚಕ್ರಂಗಳು. ಹನ್ನೆರಡು ಎಂದರೆ ನೋಡಿದ್ದೇನಪ್ಪ, ಕೇಳಿದ್ದೇನಪ್ಪ ? ಹನ್ನೆರಡು ಎಂದರೆ ಮಾಸಂಗಳು. ಅದು ಎಂತೆಂದರೆ, ಚೈತ್ರ, ವೈಶಾಖ, ಜ್ಯೇಷ್ಠ, ಆಷಾಢ, ಶ್ರಾವಣ, ಭಾದ್ರಪದ, ಆಶ್ವೀಜ, ಕಾರ್ತೀಕ, ಮಾರ್ಗಶಿರ, ಪುಷ್ಯ, ಮಾಘ, ಫಾಲ್ಗುಣ ಇವು ಹನ್ನೆರಡು ಮಾಸಂಗಳು. ಹನ್ನೊಂದು ಎಂದರೆ ನೋಡಿದ್ದೇನಪ್ಪ ? ಕೇಳಿದ್ದೇನಪ್ಪ ? ಹನ್ನೊಂದು ಎಂದರೆ ಭಾರತಂಗಳು. ಅದು ಎಂತೆಂದಡೆ: ಆದಿಭಾರತ, ಕೈಲಾಸಭಾರತ, ಶ್ರೀರುದ್ರಭಾರತ, ನಂದಿಭಾರತ, ನಾರ[ದ]ಭಾರ[ತ], ಭೃಗುಭಾರತ, ಮನುಭಾರತ, ಉಮಾಭಾರತ, ಪ್ರಸಿದ್ಧಭಾರತ, ಸಿದ್ಧೋರಗಭಾರತ, ಶ್ರೀರಂಗಭಾರತ ಇವು ಹನ್ನೊಂದು ಭಾರತಂಗಳು. ಹತ್ತು ಎಂದರೆ ನೋಡಿದ್ದೇನಪ್ಪ, ಕೇಳಿದ್ದೇನಪ್ಪ ? ಹತ್ತು ಎಂದರೆ, ದಶಾವತಾರಂಗಳು. ಅದು ಎಂತೆಂದರೆ, ಗ್ರಂಥ || ಮತ್ಸ್ಯಃ ಕೂರ್ಮಃ ವರಾಹಶ್ಚ ನಾರಸಿಂಹಶ್ಚ ವಾಮನಃ ರಾಮೋ ರಾಮಶ್ಚ [ಕೃಷ್ಣ]ಶ್ಚ ಬೌದ್ಧಃ ಕಲ್ಕಿ[ರೇ]ವ ಚ ಎಂದುದಾಗಿ, ಈ ದಶಾವತಾರಂಗಳಲ್ಲಿ ಯಾರಾರು ಸಂಹಾರ ಎಂದರೆ, ಮತ್ಯ್ಸಾವತಾರದಲ್ಲಿ ಅಮೃತಮಥನೇ ಸೋಮಕಾಸುರನ ಸಂಹಾರ. ಕೂರ್ಮಾವತಾರದಲ್ಲಿ ಮಂದರಪರ್ವತಕ್ಕೆ ಆಧಾರ. ವರಾಹಾವತಾರದಲ್ಲಿ ಹಿರಣ್ಯಾಕ್ಷನ ಸಂಹಾರ. ನರಸಿಂಹಾವತಾರದಲ್ಲಿ ಹಿರಣ್ಯಕಶ್ಯಪ ಸಂಹಾರ. ವಾಮನಾವತಾರದಲ್ಲಿ ಪಂಚಮೇಢ್ರಾಸುರ ಎಂಬ ರಾಕ್ಷಸನ ಸಂಹಾರ. ಪರಶುರಾಮಾವತಾರದಲ್ಲಿ ಕಾರ್ತವೀರ್ಯರ ಸಂಹಾರ. ರಫ್ಸುರಾಮಾವತಾರದಲ್ಲಿ ರಾವಣಕುಂಭಕರ್ಣರ ಸಂಹಾರ. 1ಬಲಭದ್ರ1 ನವತಾರದಲ್ಲಿ ಪ್ರಲಂಬಕವಾದ ಅಸುರರ ಸಂಹಾರ. ಬೌದ್ಧಾವತಾರದಲ್ಲಿ ತ್ರಿಪುರದಾನವಸತಿಯರ ಕೆಡಿಸಿದ. ಕಲ್ಕ್ಯವತಾರದಲ್ಲಿ 2ಕಂಸಾಸುರ, ನರಕಾಸುರ, ಬಾಣಾಸುರರ2 ಸಂಹಾರ, ಇವು ಹತ್ತು ದಶಾವತಾರಗಳು. ಒಂಬತ್ತು ಎಂದರೆ ನೋಡಿದ್ದೇನಪ್ಪ, ಕೇಳಿದ್ದೇನಪ್ಪ ? ಒಂಬತ್ತು ಎಂದರೆ ನವಗ್ರಹಂಗಳು. ಅದು ಎಂತೆಂದರೆ: ಆದಿತ್ಯ, ಸೋಮ, ಮಂಗಳ, ಬುಧ, ಬೃಹಸ್ಪತಿ, ಶುಕ್ರ, ಶನಿ, ರಾಹು, ಕೇತು- ಇವು ಒಂಬತ್ತು ನವಗ್ರಹಂಗಳು. ಎಂಟು ಎಂದರೆ ನೋಡಿದ್ದೇನಪ್ಪ ಕೇಳಿದ್ದೇನಪ್ಪ ? ಎಂಟು ಎಂದರೆ ಅಷ್ಟದಿಕ್ಪಾಲಕರು. ಅದು ಎಂತೆಂದರೆ: ಇಂದ್ರ, ಅಗ್ನಿ, ಯಮ, ನೈರುತಿ, ವರುಣ, ವಾಯುವ್ಯ, ಕುಬೇರ, ಈಶಾನ್ಯ- ಎಂಟು ಮಂದಿ ಅಷ್ಟದಿಕ್ಪಾಲಕರು. ಏಳು ಎಂದರೆ ನೋಡಿದ್ದೇನಪ್ಪ ಕೇಳಿದ್ದೇನಪ್ಪ ? ಏಳು ಎಂದರೆ ಸಪ್ತಋಷಿಗಳು. ಅದು ಎಂತೆಂದರೆ: ಗ್ರಂಥ || ಕಶ್ಯಪಾತ್ರಿ ಭರದ್ವಾಜ[ಃ] ವಿಶ್ವಾಮಿ[ತ್ರಶ್ಚ] ಗೌತಮ[ಃ] ಜಮದಗ್ನಿ[ಃ] ವಸಿಷ್ಠ[ಶ್ಚ] ಸಪ್ತೈತೇ ಋಷಯ[ಃ ಸ್ಮøತಾಃ] ಎಂದುದಾಗಿ, ಕಶ್ಯಪ, ಅತ್ರಿ, ಭರದ್ವಾಜ, ವಿಶ್ವಾಮಿತ್ರ, ಗೌತಮ, ಜಮದಗ್ನಿ, ವಸಿಷ್ಠ- ಇವರು ಏಳುಮಂದಿ ಸಪ್ತ ಋಷಿಗಳು. ಆರು ಎಂದರೆ ನೋಡಿದ್ದೇನಪ್ಪ ಕೇಳಿದ್ದೇನಪ್ಪ ? ಆರು ಎಂದರೆ ಶಾಸತ್ತ್ರಂಗಳು. ಅದು ಎಂತೆಂದರೆ: ಶಿಲ್ಪಶಾಸ್ತ್ರ, ಭರತಶಾಸ್ತ್ರ, ತರ್ಕಶಾಸ್ತ್ರ, ಶಬ್ದಶಾಸ್ತ್ರ, ಆ[ನ್ವೀಕ್ಷಕೀ]ಶಾಸ್ತ್ರ, ಜ್ಯೋತಿಷ್ಯಶಾಸ್ತ್ರ- ಇವು ಆರು ಶಾಸ್ತ್ರಂಗಳು. ಐದು ಎಂದರೆ ನೋಡಿದ್ದೇನಪ್ಪ, ಕೇಳಿದ್ದೇನಪ್ಪ ? ಐದು ಎಂದರೆ ಈಶ್ವರನ ಪಂಚ ಮುಖಂಗಳು ಅದು ಎಂತೆಂದರೆ, ಗ್ರಂಥ || ಸದ್ಯೋಜಾ[ತೋ]ದ್ಭವೋರ್ಭೂಮಿಃ] ವಾಮದೇವೋದ್ಭ[ವಂ ಜಲಂ] ಅಫ್ಸೋ[ರಾದ್ವಹ್ನಿ]ರು[ದ್ಭೂತಂ] ತತ್ಪರು[ಷಾದ್ವಾಯುರ್ಭವೇತ್ ಈಶಾನಾದ್ಗಗನಂ ಜಾತಂ] ಎಂದುದಾಗಿ, ಸದ್ಯೋಜಾತಮುಖ, ವಾಮದೇವಮುಖ, ಅಘೋರಮುಖ, ತತ್ಪುರುಷಮುಖ, ಈಶಾನ್ಯಮುಖ- ಇವು ಐದು ಪಂಚಮುಖಂಗಳು. ನಾಲಕ್ಕು ಎಂದರೆ ನೋಡಿದ್ದೇನಪ್ಪ, ಕೇಳಿದ್ದೇನಪ್ಪ ? ನಾಲಕ್ಕು ಎಂದರೆ ವೇದಂಗಳು. ಅದು ಎಂತೆಂದರೆ: ಋಗ್ವೇದ, ಯಜುರ್ವೇದ, ಸಾಮವೇದ, ಅಥರ್ವಣವೇದ- ಇವು ನಾಲ್ಕು ವೇದಂಗಳು. ಮೂರು ಎಂದರೆ ನೋಡಿದ್ದೇನಪ್ಪ, ಕೇಳಿದ್ದೇನಪ್ಪ ? ಮೂರು ಎಂದರೆ ತ್ರಿಮೂರ್ತಿಗಳು. ಅದು ಎಂತೆಂದರೆ: ಬ್ರಹ್ಮ, ವಿಷ್ಣು, ಈಶ್ವರ- ಇವರು ಮೂವರು ತ್ರಿಮೂರ್ತಿಗಳು. ಎರಡು ಎಂದರೆ ನೋಡಿದ್ದೇನಪ್ಪ, ಕೇಳಿದ್ದೇನಪ್ಪ ? ಎರಡು ಎಂದರೆ ಭಾನು ಶಶಿ. ಅದು ಎಂತೆಂದರೆ: ಸೂರ್ಯ, ಚಂದ್ರ- ಇವರಿಬ್ಬರು ಸೂರ್ಯಚಂದ್ರಾದಿಗಳು. ಒಂದು ಎಂದರೆ ನೋಡಿದ್ದೆನಪ್ಪ ಕೇಳಿದ್ದೇನಪ್ಪ ? ಒಂದು ಎಂದರೆ ಏಕೋ[ಏವ]ದೇವಃ ಅದು ಎಂತೆಂದರೆ: ದೇವನು ಒಬ್ಬನೇ. ದೇವನು] ಒಬ್ಬನೇ ಅಲ್ಲದೆ ಇಬ್ಬರೆಂದು ಬಗುಳುವನ ಮುಖವ ನೋಡಲಾಗದು ಕಾಣೋ ಕೂಡಲಾದಿ ಚನ್ನಸಂಗಮದೇವಾ.
--------------
ಕೂಡಲಸಂಗಮೇಶ್ವರ
ವೀರಮಾಹೇಶ್ವರರು ಸರ್ವಾಂಗದಲ್ಲಿ ವಿಭೂತಿ-ರುದ್ರಾಕ್ಷಿ ಧಾರಣವಾಗಿ, ಶಿವಲಿಂಗವ ಧರಿಸಿ, ಕಾವಿಲಾಂಛನವ ಪೊದ್ದರೆಂದು ಈ ಮತ್ರ್ಯಲೋಕದ ಜಡಮತಿ ಮರುಳಮಾನವರು ತಾವು ಧರಿಸುತ್ತಿರ್ಪರು. ಇಂತಪ್ಪವರ ನಡತೆ ಎಂತಾಯಿತ್ತೆಂದರೆ, ಗುರುವನರಿಯದೆ ವಿಭೂತಿಧರಿಸುವರೆಲ್ಲ ಬೂದಿಯೊಳಗಣ ಕತ್ತೆಗಳೆಂಬೆ. ತಮ್ಮ ನಿಜವ ತಾವರಿಯದೆ ರುದ್ರಾಕ್ಷಿ ಧರಿಸುವರೆಲ್ಲ ಕಳವು ಮಾಡಿ ಕೈಯ ಕಟ್ಟಿಸಿಕೊಂಡ ಕಳ್ಳರೆಂಬೆ. ಲಿಂಗದ ಸ್ವರೂಪವ ತಿಳಿಯದೆ ಕೊರಳಲ್ಲಿ ಲಿಂಗವ ಕಟ್ಟುವರೆಲ್ಲ ವಾಳೆ ಆವಿಗೆ ಯಳಗುದ್ದಿಯ ಕಟ್ಟುವಂತೆ ಕಟ್ಟುವರೆಂಬೆ. ಜಂಗಮದ ನಿಲವ ಅರಿಯದೆ ಕಾವಿಯ ಲಾಂಛನ ಹೊದ್ದವರೆಲ್ಲ ರಕ್ತಮುಳುಗಿದ ಹಸಿಯ ಚರ್ಮವ ಹೊದ್ದವರೆಂಬೆ. ಇಂತಿದರನುಭಾವವ ತಿಳಿಯದೆ ಈಶ್ವರನ ವೇಷವ ಧರಿಸಿ ಉದರಪೋಷಣಕ್ಕೆ ತಿರುಗುವರೆಲ್ಲ ಜಾತಿಹಾಸ್ಯಗಾರರೆಂಬೆ. ಇಂತಪ್ಪ ವೇಷಧಾರಿಗಳ ಶಿವಸ್ವರೂಪರೆಂದು ಭಾವಿಸುವವರ ಶಿವಸ್ವರೂಪರೆಂದು ಹೇಳುವವರ, ಇಂತಪ್ಪ ಉಭಯ ಮೂಢಾತ್ಮರ ಮುಖದ ಮೇಲೆ ಲೊಟ್ಟಲೊಟ್ಟನೆ ಉಗುಳಿ ನಿಮ್ಮ ಗಣಂಗಳ ಪಾದರಕ್ಷೆಯಿಂದ ಘಟ್ಟಿಸಿ ಅಟ್ಟೆಂದ ಕಾಣಾ ನಿಮ್ಮ ಶರಣ ಕಾಡನೊಳಗಾದ ಶಂಕರಪ್ರಿಯ ಚನ್ನಕದಂಬಲಿಂಗ ನಿರ್ಮಾಯಪ್ರಭುವೆ.
--------------
ಕಾಡಸಿದ್ಧೇಶ್ವರ
ಶಿವಶಿವಾ ದ್ವಿಜರೆಂಬ ಪಾತಕರು ನೀವು ಕೇಳಿ ಭೋ ! ನೀವು ಎಲ್ಲಾ ಜಾತಿಗೂ ನಾವೇ ಮಿಗಿಲೆಂದು, `ವರ್ಣಾನಾಂ ಬ್ರಾಹ್ಮಣೋ ಗುರುಃ' ಎಂದು, ಬಳ್ಳಿಟ್ಟು ಬಾಸ್ಕಳಗೆಡವುತಿಪ್ಪಿರಿ ನೋಡಾ. `ಆದಿ ಬಿಂದುದ್ಭವೇ ಬೀಜಂ' ಎಂಬ ಶ್ರುತಿಯಿಂ ತಿಳಿದು ನೋಡಲು ಆದಿಯಲ್ಲಿ ನಿಮ್ಮ ಮಾತಾಪಿತರ ಕೀವು ರಕ್ತದ ಮಿಶ್ರದಿಂದ ನಿಮ್ಮ ಪಿಂಡ ಉದಯಿಸಿತ್ತು. ಆ ಕೀವು ರಕ್ತಕ್ಕೆ ಆವ ಕುಲ ಹೇಳಿರೆ ? ಅದೂ ಅಲ್ಲದೆ ಪಿಂಡ ಒಂಬತ್ತು ತಿಂಗಳು ಒಡಲೊಳಗೆ ಕುರುಳು, ಮಲಮೂತ್ರ, ಕೀವು, ದುರ್ಗಂಧ, ರಕ್ತ ಖಂಡಕಾಳಿಜ ಜಂತುಗಳೊಳಗೆ, ಪಾತಾಳದೊಳಗಣ ಕ್ರಿಮಿಯಂತೆ ಹೊದಕುಳಿಗೊಂಬಂದು ನೀನಾವ ಕುಲ ಹೇಳಿರೆ ? ಅದುವಲ್ಲದೆ ಮೂತ್ರದ ಕುಳಿಯ ಹೊರವಡುವಾಗ, ಹೊಲೆ ಮುಂತಾಗಿ ಮುದುಡಿ ಬಿದಲ್ಲಿ, ಹೆತ್ತವಳು ಹೊಲತಿ, ಹುಟ್ಟಿದ ಮಗುವು ಹೊಲೆಯನೆಂದು ನಿಮ್ಮ ಕುಲಗೋತ್ರ ಮುಟ್ಟಲಮ್ಮದೆ, ಹನ್ನೆರಡು ದಿನದೊಂದು ಪ್ರಾಯಶ್ಚಿತ್ತವನಿಕ್ಕಿಸಿಕೊಂಡು ಬಂದು ನಿನ್ನಾವ ಕುಲ ಹೇಳಿರೆ ? ಮುಂಜಿಗಟ್ಟದ ಮುನ್ನ ಕೀಳುಜಾತಿ, ಮುಂಜಿಗಟ್ಟಿದ ಬಳಿಕ ಮೇಲುಜಾತಿಗಳು ಎಂಬ ಪಾತಕರು ನಿಮ್ಮ ನುಡಿ ಕೊರತೆಗೆ ನೀವು ನಾಚಬೇಡವೆ ? ನೀವು ನಾಚದಿರ್ದಡೆ ನಾ ನಿಮ್ಮ ಕುಲದ ಬೇರನೆತ್ತಿ , ತಲೆಕೆಳಗು ಮಾಡಿ ತೋರಿಹೆನು. ನಾನು ಉತ್ತಮದ ಬ್ರಾಹ್ಮಣರೆಂಬ ನಿಮ್ಮ ದೇಹ ಬ್ರಹ್ಮನೊ ? ನಿಮ್ಮ ಪ್ರಾಣ ಬ್ರಹ್ಮನೊ ? ಆವುದು ಬ್ರಾಹ್ಮಣ್ಯ ? ಬಲ್ಲಡೆ ಬಗುಳಿರಿ ! ಅರಿಯದಿರ್ದಡೆ ಕೇಳಿರಿ. ದೇಹ ಕುಲಜನೆಂದಡೆ ಚರ್ಮಕ್ಕೆ ಕುಲವಿಲ್ಲ, ಖಂಡಕ್ಕೆ ಕುಲವಿಲ್ಲ, ನರವಿಂಗೆ ಕುಲವಿಲ್ಲ, ರಕ್ತಕ್ಕೆ ಕುಲವಿಲ್ಲ, ಕೀವಿಂಗೆ ಕುಲವಿಲ್ಲ. ಕರುಳಿಂಗೆ ಕುಲವಿಲ್ಲ, ಮಲಮೂತ್ರಕ್ಕಂತೂ ಕುಲವಿಲ್ಲ, ಒಡಲೆಂಬುದು ಅಪವಿತ್ರವಾಯಿತ್ತು, ಕುಲವೆಲ್ಲಿಯದೊಡಲಿಂಗೆ ? ಅವಂತಿರಲಿ ; ಇನ್ನು ನಿಮ್ಮ ಪ್ರಾಣಕ್ಕೆ ಕುಲವುಂಟೆಂದಡೆ. ಪ್ರಾಣ ದಶವಾಯುವಾದ ಕಾರಣ, ಆ ವಾಯು ಹಾರುವನಲ್ಲ. ಅದುವಲ್ಲದೆ ನಿಮ್ಮ ಒಡಲನಲಗಾಗಿ ಇರಿವ ಕಾಮ ಕ್ರೋಧ ಲೋಭ ಮೋಹ ಮದ ಮತ್ಸರಂಗಳು ಉತ್ತಮ ಕುಲವೆಂಬ ಅವು ಮುನ್ನವೆ ಪಾಪಕಾರಿಗಳಾದ ಕಾರಣ, ಅವಕ್ಕೆ ಕುಲವಿಲ್ಲ. ನಿಲ್ಲು ! ಮಾಣು ! ನಿಮ್ಮೊಳಗಣ ಸಪ್ತವ್ಯಸನಂಗಳು ಉತ್ತಮ ಕುಲವೆಂಬ ಅವು ಮುನ್ನವೆ ದುರ್ವ್ಯಸನಂಗಳಾದ ಕಾರಣ, ಅದಕೆಂದೂ ಕುಲವಿಲ್ಲ. ನಿಲ್ಲು ! ಮಾಣು ! ನಿಮ್ಮ ಅಷ್ಟಮದಂಗಳು ಉತ್ತಮ ಕುಲವೆಂಬ ಅವು ನಿನ್ನ ಸುರೆಯ ಸವಿದ ಕೋಡಗದ ಹಾಂಗೆ ನಿಮ್ಮ ಗಾಣಲೀಯವಾದ ಕಾರಣ, ಅವು ಕುಲವಿಲ್ಲ. ನಿಲ್ಲು ! ಬಗುಳದಿರು ! ಇನ್ನು ಒಡಲ ತಾಪತ್ರಯಂಗಳು ಉತ್ತಮ ಕುಲವೆಂಬ ಅವು ನಿಮ್ಮ ಇರಿದಿರಿದು ಸುಡುವ ಒಡಗಿಚ್ಚುಗಳು. ಅವು ಕುಲವಿಲ್ಲ. ನಿಲ್ಲು ! ಮಾಣು ! ನಿಮ್ಮೊಡಲ ಮುಚ್ಚಿದ ಮಲಮೂತ್ರಂಗಳ ಕುಲವುಂಟೆ ? ಅವು ಅರಿಕೆಯಲಿ ಮಲಮೂತ್ರಂಗಳಾದ ಕಾರಣ, ಅವಕ್ಕೆ ಕುಲವಿಲ್ಲ ನಿಲ್ಲು ! ಮಾಣು ! ಇನ್ನು ಉಳಿದ ಅಂತಃಕರಣಂಗಳಿಗೆ ಉತ್ತಮ ಕುಲವೆಂಬಿರಿ. ಅವ ನೀವು ಕಾಣಿರಿ, ನಿಮ್ಮನವು ಕಾಣವು. ಅದು ಕಾರಣ ಬಯಲಭ್ರಮೆಗೆ ಉತ್ತಮ ಕುಲವುಂಟೆ ? ಇಲ್ಲ ! ಇಲ್ಲ !! ನಿಲ್ಲು ! ಮಾಣು ! ಇಂತು ನಿಮ್ಮ ಪಂಚಭೂತ ಸಪ್ತಧಾತು ಪಂಚೇಂದ್ರಿಯಂಗಳು ಉತ್ತಮ ಕುಲವೆಂಬ ಅವು ಎಲ್ಲಾ ಜೀವರಾಶಿಗೂ ನಿಮಗೂ ಒಂದೇ ಸಮಾನ. ಅದೆಂತೆಂದಡೆ : ಸಪ್ತಧಾತುಸಮಂ ಪಿಂಡಂ ಸಮಯೋನಿಸಮುದ್ಭವಂ | ಆತ್ಮಾಜೀವಸಮಾಯುಕ್ತಂ ವರ್ಣಾನಾಂ ಕಿಂ ಪ್ರಯೋಜನಂ || ಎಂದುದಾಗಿ, ನಿಮ್ಮ ದೇಹಕ್ಕೆ ಕುಲವಾವುದು ಹೇಳಿರೆ ! ಇದಲ್ಲದೆ ಆತ್ಮನು ದೇಹವ ಬಿಟ್ಟು, ಒಂದು ಘಳಿಗೆ ತೊಲಗಿರಲು ಆ ದೇಹ ಹಡಿಕೆಯಾಗಿ ಹುಳಿತು, ನಾಯಿ ನರಿ ತಿಂಬ ಕಾರಣ ನಿಮ್ಮ ದೇಹ ಅಪವಿತ್ರ ಕಾಣಿರೆ ! ಇಂತಪ್ಪ ಅಪವಿತ್ರ ಕಾರ್ಯಕ್ಕೆ ಕುಲವಿಲ್ಲ. ಆ ಕಾರ್ಯಕ್ಕೆ ಕುಲವುಂಟೆಂದಡೆ ಮೇಲುಜಾತಿಯ ದೇಹದೊಳಗೆ ಹಾಲುವುಳ್ಳಡೆ ಕೀಳುಜಾತಿಯ ದೇಹದೊಳಗೆ ರಕ್ತವುಳ್ಳಡೆ ಅದು ಕುಲವಹುದು ! ಅಂಥಾ ಗುಣ ನಿಮಗಿಲ್ಲವಾಗಿ, ಎಲ್ಲಾ ಜೀವರಾಶಿಯ ದೇಹವು, ನಿಮ್ಮ ದೇಹವು ಒಂದೇ ಸಮಾನವಾದ ಕಾರಣ ನಿಮಗೆ ಕುಲವಿಲ್ಲ ! ನಿಲ್ಲು ! ಮಾಣು ! ಒಡಲು ಕರಣಾದಿಗಳು ಕುಲವಿಲ್ಲದೆ ಹೋದಡೂ ಎಲ್ಲವೂ ಅರಿವ ಚೈತನ್ಯಾತ್ಮಕನೆ, ಸತ್ಕುಲಜನೆ ಆತ್ಮನು, ಆವ ಕುಲದೊಳಗೂ ಅಲ್ಲ. ಶರೀರ ಬೇರೆ, ಆತ್ಮ ಬೇರೆ. ಅದೆಂತೆಂದಡೆ : ಭೂದೇವಮೃದ್ಭಾಂಡಮನೇಕ ರೂಪಂ ಸುವರ್ಣಮೇಕಂ ಬಹುಭೂಷಣಾನಾಂ | ಗೋಕ್ಷೀರಮೇಕಂ ಬಹುವರ್ಣಧೇನುಃ | ಶರೀರಭೇದಸ್ತೆ ್ವೀಕಃ ಪರಮಾತ್ಮಾ || ಎಂದುದಾಗಿ, ಶರೀರಂಗಳು ಅನಂತ, ಆತ್ಮನೊಬ್ಬನೆ. ಅದು ಕಾರಣ, ಆ ಆತ್ಮನು ಆವ ಕುಲದಲ್ಲೂ ಅಲ್ಲ. ಇನ್ನು ಆವ ಠಾವಿನಲ್ಲಿ ನಿಮ್ಮ ಕುಲದ ಪ್ರತಿಷ್ಠೆಯ ಮಾಡಿ ತೋರಿವಿರೊ ? ದೇಹದ ಮೃತ್ತಿಕೆ ಆತ್ಮ ನಿರಾಕಾರನೆನುತ್ತಿರಲು, ಇನ್ನಾವ ಪರಿಯಲ್ಲಿ ನಾ ಉತ್ತಮ ಕುಲಜರೆಂಬಿರೊ ? ಜೀವಶ್ಶಿವೋ ಶಿವೋ ಜೀವಸ್ಸಜೀವಃ ಕೇವಲಃ ಶಿವಃ | ಪಾಶಬದ್ಧಸ್ಥಿತೋ ಜೀವಃ ಪಾಶಮುಕ್ತಃ ಸದಾಶಿವಃ || ಎಂಬ ಶ್ರುತಿಯಂ ತಿಳಿದು ನೋಡಲು, ನೀವೆಲ್ಲಾ ಪಾಶಬದ್ಧ ಜೀವಿಗಳಾಗುತ್ತ ಇರಲು, ನಿಮಗೆಲ್ಲಿಯ ಉತ್ತಮ ಕುಲ ? ಪಾಶಮುಕ್ತರಾದ ಎಮ್ಮ ಶಿವಭಕ್ತರೆ ಕುಲಜರಲ್ಲದೆ ನಿಮಗೆ ಉತ್ತಮ ಕುಲ ಉಂಟಾದಡೆ, ನಿಮ್ಮ ದೇಹದೊಳಗೆ ಹೊರಗೆ ಇಂಥಾ ಠಾವೆಂದು ಬೆರಳುಮಾಡಿ ತೋರಿ ! ಅದೂ ಅಲ್ಲದೆ ಒಂದು ಪಕ್ಷಿಯ ತತ್ತಿಯೊಳಗೆ ಹಲವು ಮರಿ ಹುಟ್ಟಿದಡೆ ಒಂದರ ಮರಿಯೋ, ಹಲವು ಪಕ್ಷಿಯ ಮರಿಯೋ ? ತಿಳಿದು ನೋಡಿದಡೆ ಅದಕ್ಕೆ ಬೇರೆ ಬೇರೆ ಪಕ್ಷಿಗಳೆಂಬ ಕುಲವಿಲ್ಲ. ಅಹಂಗೆ ಒಬ್ಬ ಬ್ರಹ್ಮನ ಅಂಡವೆಂಬ ತತ್ತಿಯೊಳಗೆ ಸಕಲ ಜೀವರಾಶಿ ಎಲ್ಲಾ ಉದಯಿಸಿದವು. ಅದೆಂತೆಂದಡೆ : ಪೃಥಿವ್ಯಾಕಾಶಯೋರ್ಭಾಂಡಂ ತಸ್ಯಾಂಡಂ ಜಾಯತೇ ಕುಲಂ | ಅಂತ್ಯಜಾತಿದ್ರ್ವಿಜಾತಿರ್ಯಾ ಏಕಯೋನಿಸಹೋದರಾ || ಎಂದುದಾಗಿ, ಇರುಹೆ ಮೊದಲು, ಆನೆ ಕಡೆಯಾದ ಸಚರಾಚರವೆಲ್ಲವು ಒಬ್ಬ ಬ್ರಹ್ಮನ ಅಂಡದೊಳಗೆ ಹುಟ್ಟಿ, ಏಕಯೋನಿ ಸಹೋದರರೆಂದು ಪ್ರತಿಷ್ಠಿಸುತ್ತಿರಲು, ನಿಮಗೆಲ್ಲಿಯ ಕುಲವೊ ? ಶಿವಭಕ್ತರೆ ಉತ್ತಮ ಕುಲಜರೆಂದು, ಮಿಕ್ಕಿನವರೆಲ್ಲಾ ಕೀಳುಜಾತಿ ಎಂಬುದನು ಓದಿ ಬರಿದೊರೆಯಾದಡು ನಾನು ನಿಮಗೆ ಹೇಳಿಹೆನು ಕೇಳಿ ಶ್ವಪಚೋಪಿ ಮುನಿಶ್ರೇಷ್ಠಶ್ಶಿವ ಸಂಸ್ಕಾರಸಂಯುತಃ | ಶಿವಸಂಸ್ಕಾರಹೀನಶ್ಚ ಬ್ರಾಹ್ಮಣಃ ಶ್ವಪಚಾಧಮಃ || ಎಂಬ ಶ್ರುತಿಗೆ ಇದಿರುತ್ತರವ ಕೊಟ್ಟಡೆ, ಬಾಯಲ್ಲಿ ಕಾಷ್ಟವ ಮೂಡುವುದಾಗಿ ನೀವೇ ಕೀಳುಜಾತಿಗಳು, ಅರಿದ ಶಿವಭಕ್ತರು ಸತ್ಕುಲಜರೆಂದು ಸುಮ್ಮನಿರಿರೋ. ಅಲ್ಲದ ಅಜ್ಞಾನರಾದುದೆಲ್ಲಾ ಒಂದು ಕುಲ. ಸುಜ್ಞಾನರಾದುದೆಲ್ಲಾ ಒಂದು ಕುಲವೆಂದು ಶಾಸ್ತ್ರಗಳು ಹೇಳುತ್ತಿದಾವೆ. ಅದೆಂತೆಂದಡೆ : ಆಹಾರನಿದ್ರಾಭಯಮೈಥುನಂ ಚ ಸಾಮಾನ್ಯಮೇತತ್ಪಶುಬ್ಥಿರ್ನರಾಣಾಂ | ಜ್ಞಾನಂ ಹಿ ತೇಷಾಂ ಅದ್ಥಿಕೋ ವಿಶೇಷಃ ಜ್ಞಾನೇನ ಹೀನಾಃ ಪಶುಬ್ಥಿಃ ಸಮಾನಾಃ || ಎಂದುದಾಗಿ, ಅಜ್ಞಾನತಂತುಗಳು ನೀವೆಲ್ಲರೂ ಕರ್ಮಪಾಶಬದ್ಧರು. ನಿಮಗೆಲ್ಲಿಯದೊ ಸತ್ಕುಲ ? ಇದು ಅಲ್ಲದೆ ನಿಮ್ಮ ನುಡಿಯೊಡನೆ ನಿಮಗೆ ಹಗೆಮಾಡಿ ತೋರಿಹೆನು. ಕೇಳೆಲವೊ ನಿಮಗೆ ಕುಲವು ವಶಿಷ್ಟ, ವಿಶ್ವಾಮಿತ್ರ, ಭಾರದ್ವಾಜ, ಕೌಂಡಿಲ್ಯ, ಕಾಶ್ಯಪನೆಂಬ ಋಷಿಗಳಿಂದ ಬಂದಿತ್ತೆಂಬಿರಿ. ಅವರ ಪೂರ್ವವನೆತ್ತಿ ನುಡಿದಡೆ ಹುರುಳಿಲ್ಲ. ಅವರೆಲ್ಲಾ ಕೀಳುಜಾತಿಗಳಾದ ಕಾರಣ, ನೀವೇ ಋಷಿಮೂಲವನು, ನದಿಮೂಲವನೆತ್ತಲಾಗದೆಂಬಿರಿ. ಇನ್ನು ನಿಮ್ಮ ನುಡಿ ನಿಮಗೆ ಹಗೆಯಾಯಿತ್ತೆಂದೆ ಕೇಳಿರೊ. ಆ ಋಷಿಗಳ ಸಂತಾನವಾಗಿ ನಿಮ್ಮ ಮೂಲವನೆತ್ತಿದಡೂ ಹುರುಳಿಲ್ಲ. ಅದಂತಿರಲಿ. ನಿಮ್ಮ ಕುಲಕೆ ಗುರುವೆನಿಸುವ ಋಷಿಗಳೆಲ್ಲರೂ ಲಿಂಗವಲ್ಲದೆ ಪೂಜಿಸರು, ವಿಭೂತಿ ರುದ್ರಾಕ್ಷಿಯನಲ್ಲದೆ ಧರಿಸರು, ಪಂಚಾಕ್ಷರಿಯನಲ್ಲದೆ ಜಪಿಸರು, ಜಡೆಯನ್ನಲ್ಲದೆ ಕಟ್ಟರು. ಹಾಗೆ ನೀವು ಲಿಂಗವ ಪೂಜಿಸಿ, ವಿಭೂತಿ ರುದ್ರಾಕ್ಷಿಯ ಧರಿಸಿ, ಪಂಚಾಕ್ಷರಿಯ ಜಪಿಸಿ, ಜಡೆಯ ಕಟ್ಟಿ, ಈಶ್ವರನ ಲಾಂಛನವ ಧರಿಸಿದಡೆ ನೀವು ಋಷಿಮೂಲದವರಹುದು. ಹೇಗಾದಡೂ ಅನುಸರಿಸಿಕೊಳಬಹುದು. ಅದು ನಿಮಗಲ್ಲದ ಮಟ್ಟಿಯನ್ನಿಟ್ಟು ವಿಷ್ಣುವಂ ಪೂಜಿಸಿ ಮುಡುಹಂ ಸುಡಿಸಿಕೊಂಡು, ಸಾಲಿಗ್ರಾಮ, ಶಕ್ತಿ, ಲಕ್ಷ್ಮಿ, ದುರ್ಗಿ ಎಂಬ ಕಿರುಕುಳದೈವವಂ ಪೂಜಿಸಿ, ನರಕಕ್ಕಿಳಿದು ಹೋಹರಾದ ಕಾರಣ, ನೀವೇ ಹೀನಜಾತಿಗಳು. ನಿಮ್ಮ ಋಷಿಮಾರ್ಗವ ವಿಚಾರಿಸಿ ನಡೆಯಿರಾಗಿ ನೀವೇ ಲಿಂಗದ್ರೋಹಿಗಳು. ಲಿಂಗವೆ ದೈವವೆಂದು ಏಕನಿಷ್ಠೆಯಿಂದಲಿರಿರಾಗಿ ನೀವೇ ಲಿಂಗದ್ರೋಹಿಗಳು. ಪಂಚಾಕ್ಷರಿಯ ನೆನೆಯಿರಾಗಿ ಮಂತ್ರದ್ರೋಹಿಗಳು. ರುದ್ರಾಕ್ಷಿಯ ಧರಿಸರಾದ ಕಾರಣ ನೀವು ಶಿವಲಾಂಛನ ದ್ರೋಹಿಗಳು. ಶಿವಭಕ್ತರಿಗೆರಗದ ಕಾರಣ ನೀವು ಶಿವಭಕ್ತರಿಗೆ ದ್ರೋಹಿಗಳು. ನಿಮ್ಮ ಮುಖವ ನೋಡಲಾಗದು. ಬರಿದೆ ಬ್ರಹ್ಮವನಾಚರಿಸಿ ನಾವು ಬ್ರಹ್ಮರೆಂದೆಂಬಿರಿ. ಬ್ರಹ್ಮವೆಂತಿಪ್ಪುದೆಂದರಿಯಿರಿ. ಬ್ರಹ್ಮಕ್ಕೂ ನಿಮಗೂ ಸಂಬಂಧವೇನೊ ? ಸತ್ಯಂ ಬ್ರಹ್ಮ ಶುಚಿಬ್ರ್ರಹ್ಮ ಇಂದ್ರಿಯನಿಗ್ರಹಃ | ಸರ್ವಜೀವದಯಾಬ್ರಹ್ಮ ಇತೈ ್ಯೀದ್ಬ್ರಹ್ಮ ಲಕ್ಷಣಂ | ಸತ್ಯಂ ನಾಸ್ತಿ ಶುಚಿರ್ನಾಸ್ತಿ ನಾಸ್ತಿ ಚೇಂದ್ರಿಯ ನಿಗ್ರಹಃ | ಸರ್ವಜೀವ ದಯಾ ನಾಸ್ತಿ ಏತಚ್ಚಾಂಡಾಲ ಲಕ್ಷಣಂ || ಬ್ರಹ್ಮಕ್ಕೂ ನಿಮಗೂ ಸಂಬಂಧವೇನೊ ? ಬ್ರಹ್ಮವೆ ನಿಃಕರ್ಮ, ನೀವೇ ಕರ್ಮಿಗಳು. ಮತ್ತೆಂತೊ `ಬ್ರಹ್ಮಂ ಚರೇತಿ ಬ್ರಹ್ಮಣಾಂ' ಎಂದು ಗಳವುತ್ತಿಹಿರಿ. ಗಾಯತ್ರಿಯ ಜಪಿಸಿ ನಾವು ಕುಲಜರೆಂಬಿರಿ. ಆ ಗಾಯತ್ರಿ ಕರ್ಮವಲ್ಲದೆ ಮುಕ್ತಿಗೆ ಕಾರಣವಿಲ್ಲ. ಅಂತು ಗಾಯತ್ರಿಯಿಂದ ನೀವು ಕುಲಜರಲ್ಲ. ವೇದವನೋದಿ ನಾವೇ ಬ್ರಹ್ಮರಾದೆವೆಂಬಿರಿ. ವೇದ ಹೇಳಿದ ಹಾಂಗೇ ನಡೆಯಿರಿ. ಅದೆಂತೆಂದಡೆ : ``ದ್ಯಾವಾಭೂವಿೂ ಜನಯನ್ ದೇವ ಏಕಃ'' ಎಂದೋದಿ ಮರದು, ವಿಷ್ಣು ವನೆ ಭಜಿಸುವಿರಿ. ನೀವೇ ವೇದವಿರುದ್ಧಿಗಳು. ``ವಿಶ್ವತೋ ಮುಖ ವಿಶ್ವತೋ ಚಕ್ಷು ವಿಶ್ವತೋ ಬಾಹು'' ಎಂದೋದಿ ಮತ್ತೆ , ``ಏಕೋ ರುದ್ರೋ ನ ದ್ವಿತೀಯಾಯ ತಸ್ಥೇ'' ಎಂದು ಮರದು, ಬೇರೊಬ್ಬ ದೈವ ಉಂಟೆಂದು ಗಳಹುತ್ತಿದಿರಿ. ನೀವೇ ವೇದದ್ರೋಹಿಗಳು. ``ಏಕಮೇವಾದ್ವಿತಿಯಂ ಬ್ರಹ್ಮ''ವೆಂದೋದಿ, ಕರ್ಮದಲ್ಲಿ ಸಿಕ್ಕಿದೀರಿ. ನೀವೇ ದುಃಕರ್ಮಿಗಳು. ``ಅಯಂ ಮೇ ಹಸ್ತೋ ಭಗವಾನ್, ಅಯಂ ಮೇ ಭಗವತ್ತರಃ |'' ಎಂದೋದಿ, ಅನ್ಯಪೂಜೆಯ ಮಾಡುತಿದೀರಿ. ನೀವೇ ಪತಿತರು. ``ಶಿವೋ ಮೇ ಪಿತಾ'' ಎಂದೋದಿ, ಸನ್ಯಾಸಿಗಳಿಗೆ ಮಕ್ಕಳೆಂದಿರಿ. ನೀವೇ ಶಾಸ್ತ್ರವಿರುದ್ಧಿಗಳು. ಸದ್ಯೋಜಾತದ್ಭವೇದ್ಭೂಮಿರ್ವಾಮದೇವಾದ್ಭವೇಜ್ಜಲಂ | ಅಘೋರಾದ್ವನ್ಹಿರಿತ್ಯುಕ್ತಸ್ತತ್ಪುರುಷಾದ್ವಾಯುರುಚ್ಯತೇ || ಈಶಾನ್ಯಾದ್ಗಗನಾಕಾರಂ ಪಂಚಬ್ರಹ್ಮಮಯಂ ಜಗತ್ | ಎಂದೋದಿ, ಸರ್ವವಿಷ್ಣುಮಯ ಎನ್ನುತ್ತಿಪ್ಪಿರಿ. ನಿಮ್ಮಿಂದ ಬಿಟ್ಟು ಶಿವದ್ರೋಹಿಗಳಾರೊ ? ``ಭಸ್ಮ ಜಲಮಿತಿ ಭಸ್ಮ ಸ್ಥಲಮಿತಿ ಭಸ್ಮ |'' ಎಂದೋದಿ, ಮರದು ವಿಭೂತಿಯ ನೀಡಲೊಲ್ಲದೆ ಮಟ್ಟಿಯಂ ನೀಡುವಿರಿ. ನಿಮ್ಮಿಂದ ಪತಿತರಿನ್ನಾರೊ ? ``ರುದ್ರಾಕ್ಷಧಾರಣಾತ್ ರುದ್ರಃ'' ಎಂಬುದನೋದಿ ರುದ್ರಾಕ್ಷಿಯಂ ಧರಿಸಲೊಲ್ಲದೆ, ಪದ್ಮಾಕ್ಷಿ ತೊಳಸಿಯ ಮಣಿಯಂ ಕಟ್ಟಿಕೊಂಬಿರಿ. ನಿಮ್ಮಿಂದ ಪಾಪಿಗಳಿನ್ನಾರೊ ? ``ಪಂಚಾಕ್ಷರಸಮಂ ಮಂತ್ರಂ ನಾಸ್ತೀ ತತ್ವಂ ಮಹಾಮುನೇ '' ಎಂಬುದನೋದಿ, ಪಂಚಾಕ್ಷರಿಯ ಜಪಿಸಲೊಲ್ಲದೆ, ಗೋಪಳಾ ಮಂತ್ರವ ನೆನವಿರಿ ಎಂತೊ ? ನಿಮ್ಮ ನುಡಿ ನಿಮಗೆ ವಿರುದ್ಧವಾಗಿರಲು, ನಿಮ್ಮ ಓದು ವೇದ ನಿಮಗೆ ವಿರುದ್ಧವಾಗಿರಲು, ನಿಮ್ಮ ಉತ್ತಮ ಕುಲಜರೆಂದು ವಂದಿಸಿದವರಿಗೆ ಶೂಕರ ಜನ್ಮದಲ್ಲಿ ಬಪ್ಪುದು ತಪ್ಪದು ನೋಡಿರೆ ! ವಿಪ್ರಾಣಾಂ ದರಿಶನೇ ಕಾಲೇ ಪಾಪಂ ಭುಂಜಂತಿ ಪೂಜಕಾಃ | ವಿಪ್ರಾಣಾಂ ವದನೇನೈವ ಕೋಟಿಜನ್ಮನಿ ಶೂಕರಃ || ಇಂತೆಂದುದಾಗಿ, ನಿಮ್ಮೊಡನೆ ಮಾತನಾಡಿದಡೆ ಪಂಚಮಹಾಪಾತಕಃ ನಿಮ್ಮ ಮುಖವ ನೋಡಿದಡೆ ಅಘೋರನರಕ. ಅದೆಂತೆಂದಡೆ : ಒಬ್ಬ ಹಾರುವನ ದಾರಿಯಲ್ಲಿ ಕಂಡದಿರೆ ಇರಿದು ಕೆಡಹಿದಲ್ಲದೆ ಹೋಗಬಾರದೆಂದು ನಿಮ್ಮ ವಾಕ್ಯವೆಂಬ ನೇಣಿಂದ ಹೆಡಗುಡಿಯ ಕಟ್ಟಿಸಿಕೊಳುತಿಪ್ಪಿರಿ. ಮತ್ತು ನಿಮ್ಮ ದುಶ್ಯರೀರತ್ರಯವನೆಣಿಸುವಡೆ ``ಅಣೋರಣೀಯಾನ್ ಮಹತೋ ಮಹೀಯಾನ್'' ಎಂಬುದ ನೀವೇ ಓದಿ, ಪ್ರಾಣಿಯಂ ಕೊಂದು ಯಾಗವನ್ನಿಕ್ಕಿ, ದೇವರ್ಕಳುಗಳಿಗೆ ಹೋಮದ ಹೊಗೆಯಂ ತೋರಿ, ಕೊಬ್ಬು ಬೆಳೆದ ಸವಿಯುಳ್ಳ ಖಂಡವನೆ ತಿಂದು, ಸೋಮಪಾನವೆಂಬ ಸುರೆಯನೆ ಕುಡಿದು, ನೊಸಲಕಣ್ಣ ತೋರುವಂತಹ ಶಿವಭಕ್ತನಾದಡೂ ನಿಂದಿಸಿ ನುಡಿವುತಿಪ್ಪಿರಿ. ನಿಮ್ಮೊಡನೆ ನುಡಿವಡೆ ಗುರುಲಿಂಗವಿಲ್ಲದವರು ನುಡಿವರಲ್ಲದೆ, ಗುರುಲಿಂಗವುಳ್ಳವರು ನುಡಿವರೆ ? ಇದು ಶ್ರುತ ದೃಷ್ಟ ಅನುಮಾನದಿಂದ ವಿಚಾರಿಸಿ ನೋಡಲು, ನೀವೇ ಪಂಚಮಹಾಪಾತಕರು. ಶಿವಭಕ್ತಿಯರಿಯದ ನರರು ಪೀನಕುರಿಗಳು. ನಿಮ್ಮಿಂದ ಏಳುಬೆಲೆ ಹೊರಗಾದ ಹೊಲೆಯನೆ ಉತ್ತಮ ಕುಲಜನೆಂದು ಮುಂಡಿಗೆಯ ಹಾಕಿದೆನು, ಎತ್ತಿರೊ ಸತ್ಯವುಳ್ಳಡೆ ! ಅಲ್ಲದಡೆ ನಿಮ್ಮ ಬಾಯಬಾಲವ ಮುಚ್ಚಿಕೊಳ್ಳಿರೆ. ಎಮ್ಮ ಶಿವಭಕ್ತರೇ ಅದ್ಥಿಕರು, ಎಮ್ಮ ಶಿವಭಕ್ತರೇ ಕುಲಜರು, ಎಮ್ಮ ಶಿವಭಕ್ತರೇ ಸದಾಚಾರಿಗಳು, ಎಮ್ಮ ಶಿವಭಕ್ತರೇ ಪಾಪರಹಿತರು, ಎಮ್ಮ ಶಿವಭಕ್ತರೇ ಸರ್ವಜೀವ ದಯಾಪಾರಿಗಳು, ಎಮ್ಮ ಶಿವಭಕ್ತರೇ ಸದ್ಯೋನ್ಮುಕ್ತರಯ್ಯಾ, ಘನಗುರು ಶಿವಲಿಂಗ ರಾಮನಾಥ.
--------------
ವೀರಶಂಕರದಾಸಯ್ಯ
ಒಂದು ಜಡಿಯ ಬಿಚ್ಚಿ ಸಹಸ್ರ ಹುರಿಗೂಡಿದ ಒಂದು ಹಗ್ಗ. ಮೂರು ಹುರಿಗೂಡಿದ ಒಂದು ಹಗ್ಗ. ಒಂದು ಹುರಿಗೂಡಿದ ಒಂದು ಹಗ್ಗ. ನಾಲ್ಕು ಹುರಿಗೂಡಿದ ಒಂದು ಹಗ್ಗ. ಆರು ಹುರಿಗೂಡಿದ ಒಂದು ಹಗ್ಗ. ಹತ್ತು ಹುರಿಗೂಡಿದ ಒಂದು ಹಗ್ಗ. ದ್ವಾದಶ ಹುರಿಗೂಡಿದ ಒಂದು ಹಗ್ಗ. ಷೋಡಶ ಹುರಿಗೂಡಿದ ಒಂದು ಹಗ್ಗ. ಎರಡು ಹುರಿಗೂಡಿದ ಒಂದು ಹಗ್ಗ. ಇಂತೀ ಹುರಿಗೂಡಿದ ಹಗ್ಗ ಮೊದಲಾದ ಅನೇಕ ಹುರಿಗೂಡಿದ ಒಂದು ಅಖಂಡ ಹಗ್ಗವಮಾಡಿ, ನಾಲ್ಕು ಹುರಿ ಹಗ್ಗದಿಂ ಬ್ರಹ್ಮನ ಕಟ್ಟಿ, ಷಡುಹುರಿ ಹಗ್ಗದಿಂ ವಿಷ್ಣುವಿನ ಕಟ್ಟಿ, ದಶಹುರಿ ಹಗ್ಗದಿಂ ರುದ್ರನ ಕಟ್ಟಿ, ದ್ವಾದಶಹುರಿ ಹಗ್ಗದಿಂ ಈಶ್ವರನ ಕಟ್ಟಿ, ಷೋಡಶಹುರಿ ಹಗ್ಗದಿಂ ಸದಾಶಿವನ ಕಟ್ಟಿ, ದ್ವಿಹುರಿ ಹಗ್ಗದಿಂ ಶಿವನ ಕಟ್ಟಿ, ಸಹಸ್ರ ಹುರಿಹಗ್ಗದಿಂ ಮತ್ರ್ಯದರಸನ ಕಟ್ಟಿ, ಮೂರು ಹುರಿಹಗ್ಗದಿಂ ಸ್ವರ್ಗಲೋಕದರಸನ ಕಟ್ಟಿ, ಒಂದು ಹುರಿಹಗ್ಗದಿಂ ಪಾತಾಳಲೋಕದರಸನ ಕಟ್ಟಿ, ಅನಂತ ಹುರಿಗೂಡಿದ ಅಖಂಡ ಹಗ್ಗದಿಂ ಚತುರ್ದಶಭುವನಯುಕ್ತವಾದ ಬ್ರಹ್ಮಾಂಡವ ಕಟ್ಟಿ, ಕಾಯಕವ ಮಾಡುತಿರ್ದನಯ್ಯ ಕಾಡನೊಳಗಾದ ಶಂಕರಪ್ರಿಯ ಚನ್ನಕದಂಬಲಿಂಗ ನಿರ್ಮಾಯಪ್ರಭುವೆ. ಈ ಭೇದವ ಬಲ್ಲವರು ಲಿಂಗಸಂಬಂದ್ಥಿಗಳು ಈ ಭೇದವ ತಿಳಿಯದವರು ಅಂಗಸಂಬಂದ್ಥಿಗಳು.
--------------
ಕಾಡಸಿದ್ಧೇಶ್ವರ
ಶ್ರೀಗುರುಲಿಂಗಜಂಗಮದ ಧೂಳಪಾದೋದಕದಿಂದ ಸಮಸ್ತಲೋಕದ ಪ್ರಾಣಿಗಳನೆಲ್ಲವ ಭವತ್ವವಳಿದು ಭೃತ್ಯಭಕ್ತಿಮಾರ್ಗವ ತೋರುವುದಯ್ಯ, ಶ್ರೀಗುರುಲಿಂಗಜಂಗಮದ ದೀಕ್ಷಾಪಾದೋದಕದಿಂದ ಸಮಸ್ತ ಪದಾರ್ಥಂಗಳೆಲ್ಲವ ಶಿವಗಣಪದಕ್ಕೆ ಯೋಗ್ಯವಾಗುವಂತೆ ಮಾಡುವುದಯ್ಯ. ಶ್ರೀಗುರುಲಿಂಗಜಂಗಮದ ಶಿಕ್ಷಾಪಾದೋದಕದಿಂದ ಬ್ರಹ್ಮನ ಉತ್ಪತ್ಯ, ವಿಷ್ಣುವಿನ ಸ್ಥಿತಿ, ರುದ್ರನ ಲಯ, ಈಶ್ವರನ ತಿರೋಧಾನ, ಸದಾಶಿವನ ಅನುಗ್ರಹ ತೊಡದು ಶಿವಶರಣಗಣಂಗಳ ನಿಜನಿವಾಸವ ತೋರುವುದಯ್ಯ. ಶ್ರೀಗುರುಲಿಂಗಜಂಗಮದ ಮಹಾಜ್ಞಾನ ಪಾದೋದಕದಿಂದ ಷಡ್ವಿಧ ದೀಕ್ಷಾತ್ರಯವ ಕರುಣಿಸಿ, ಷಟ್ಸ್ಥಲಮಾರ್ಗವ ತೋರುವುದಯ್ಯ. ಶ್ರೀಗುರುಲಿಂಗಜಂಗಮದ ಸ್ಪರ್ಶನೋದಕ, ಅವಧಾನೋದಕ, ಆಪ್ಯಾಯನೋದಕದಿಂದ ತ್ರಿವಿಧಲಿಂಗಾಂಗ ಸಮರಸದ ಸನ್ಮಾರ್ಗಾಚಾರಕ್ರಿಯಾಜ್ಞಾನವ ತೋರುವುದಯ್ಯ. ಶ್ರಿಗುರುಲಿಂಗಜಂಗಮದ ಹಸ್ತೋದಕ-ಪರಿಣಾಮೋದಕ-ನಿರ್ನಾಮೋದಕದಿಂದ ಷಡ್ವಿಧಲಿಂಗಾಂಗ ಸಮರಸಾಚರಣೆಯ ಮಾರ್ಗದ, ಮೀರಿದ ಕ್ರಿಯಾಜ್ಞಾನವ ತೋರುವುದಯ್ಯ. ಶ್ರೀಗುರುಲಿಂಗಜಂಗಮದ ಸತ್ಯೋದಕ-ಕರುಣಜಲ- ವಿನಯಜಲ-ಸಮತಾಜಲದಿಂದ ಸಮಸ್ತಪ್ರಮಥಗಣಂಗಳೆಲ್ಲ ಜ್ಯೋತಿರ್ಮಯವಾದರು ನೋಡ. ಶ್ರೀಗುರುಲಿಂಗಜಂಗಮದ ಪಾದೋದಕವೆ ಪರಮಾರಾಧ್ಯ ಶರಣಗಣಂಗಳಾಚಾರಸಂಪದಕ್ಕೆ ಪರಬ್ರಹ್ಮ ಜ್ಯೋತಿರ್ಮಯವಸ್ತು ನೋಡ ಸಂಗನಬಸವೇಶ್ವರ.
--------------
ಗುರುಸಿದ್ಧದೇವರು
ಗುಣವ ನೋಡದೆ ಹೊಗಳುವ ಜಂಗಮವು ಬ್ರಹ್ಮನ ಸಂತತಿ. ಕಾಡಿ ಬೇಡುವ ಜಂಗಮವು ನಾರಾಯಣನ ಸಂತತಿ. ವ್ಯಾಪಾರಿಕ ಜಂಗಮವು ಈಶ್ವರನ ಸಂತತಿ. ಹೊಗಳದೆ, ಕಾಡದೆ, ಬೇಡದೆ, ಬಲಾತ್ಕಾರದಿಂದುಣ್ಣದೆ, ವ್ಯವಹರಿಸದೆ, ಬ್ಥಿಕ್ಷಮುಖದಿಂದುಂಬ ಜಂಗಮವ ನೋಡಿ, ಎನ್ನ ಮನ ನೀವೆಂದು ನಂಬಿತ್ತಯ್ಯಾ, ಎಲೆ ಕಪಿಲಸಿದ್ಧಮಲ್ಲಿಕಾರ್ಜುನಾ.
--------------
ಸಿದ್ಧರಾಮೇಶ್ವರ
ಬ್ರಹ್ಮಂಗೆ ಸರಸ್ವತಿಯಾಗಿ ವಿಷ್ಣುವಂ ಪೂಜೆಯಂ ಮಾಡಲು, ವಿಷ್ಣುವಿಂಗೆ ಲಕ್ಷ್ಮಿಯಾಗಿ ರುದ್ರನ ಪೂಜೆಯ ಮಾಡಲು, ರುದ್ರಂಗೆ ಕ್ರಿಯಾಶಕ್ತಿಯಾಗಿ ಈಶ್ವರನ ಪೂಜೆಯಂ ಮಾಡಲು, ಈಶ್ವರಂಗೆ ಇಚ್ಫಾಶಕ್ತಿಯಾಗಿ ಸದಾಶಿವನ ಪೂಜೆಯಂ ಮಾಡಲು, ಸದಾಶಿವಂಗೆ ಜ್ಞಾನಶಕ್ತಿಯಾಗಿ ಪರಶಿವನ ಪೂಜೆಯನ್ನು ಮಾಡಲು, ಪರಶಿವಂಗೆ ಪರಾಶಕ್ತಿಯಾಗಿ ಪರಬ್ರಹ್ಮನ ಪೂಜೆಯ ಮಾಡಲು, ಪರಬ್ರಹ್ಮಂಗೆ ಚಿತ್‍ಶಕ್ತಿಯಾಗಿ ಇಂತಿರ್ದ ಬ್ರಹ್ಮರ ಪೂಜೆಯಂ ಮಾಡುವುದ ಕಂಡೆ ನೋಡಾ ಝೇಂಕಾರ ನಿಜಲಿಂಗಪ್ರಭುವೆ.
--------------
ಜಕ್ಕಣಯ್ಯ
ನವಸಾಸಾ ಅತಿಬಳನೆಂದಡೆ, ಒಂದು ಕೇಶವ ಕಿತ್ತನೆ ? ಶಿವನಿತ್ತ ಪಿಂಡವ, ಶ್ರೀರಾಮನು ಸೀತೆಗೆ ದಿಬ್ಯವನಿಕ್ಕಿಹೆನೆಂದು, ಹೋಮಕುಂಡಲದೊಳಗುರುಹಿದಡೆ, ಬ್ರಹ್ಮಾಂಡವನೊಡೆದು ಮರುಳುತಿದ್ದಲಿ ್ಲ, ಉರಿನಾಲಗೆಯ ಕೀಳನೆ ? ಪರಮನೊಲಿದ, ಪಶುಪತಿ ನಿರೂಪನೊಲಿದ, ಋಷಿಯನೊಂದು ವಾಕ್ಯದಿಂದ ಜಲ ಸಾಗರಂಗಳು ಬಂಧನಕ್ಕೆ ಬಾರವೆ, ನಳನೀಲರ ಕೈಯಲ್ಲಿ ? ಈಶ್ವರನ ಶರಣರ ಘಾಸಿಮಾಡನೆನೆಂದಡೆ, ನೊಸಲಕ್ಕರವ ತೊಡೆಯರೆ ? ಅಸುರನ ಪ್ರಹಾರವಿಡಿದು, ಹಿರಣ್ಯಾಕ್ಷನ ಕೊಂದು, ಶಿರವ ಹೋಗಾಡನೆ ನರಸಿಂಹನು? ಸ್ವತಂತ್ರನಯ್ಯಾ, ಸಕಳೇಶ್ವರದೇವ ನಿಮ್ಮ ಶರಣನು. ಸಿಡಿಲ ಸ್ವೀಕರಿಸನೆ ಶಿವಯೋಗಿ ಸಿದ್ಧರಾಮಯ್ಯನು?
--------------
ಸಕಳೇಶ ಮಾದರಸ
ಪರಾತ್ಪರ ಚಿದ್ಬ್ರಹ್ಮಪರಶಿವಮೂರ್ತಿಯು ಮನು-ಮುನಿ, ಸಿದ್ಧ-ಸಾಧಕ, ಯಕ್ಷ-ರಾಕ್ಷಸ, ಯತಿ-ವ್ರತಿ, ಶೀಲ-ನೇಮಗಳ ಭಾವಾಭಾವಕ್ಕೆ ಮೆಚ್ಚಿ, ಅವರವರ ಕಾಂಕ್ಷೆಗಳಂತೆ ಫಲಪದದಾಯುಷ್ಯಕ್ಕೆ ಯೋಗ್ಯರಾಗಿ, ಅಷ್ಟಮಹದೈಶ್ವರ್ಯದಿಂದ ಬ್ರಹ್ಮನ ಉತ್ಪತ್ತಿ, ವಿಷ್ಣುವಿನ ಸ್ಥಿತಿ, ರುದ್ರನ ಲಯ, ಈಶ್ವರನ ತಿರೋಧಾನ, ಸದಾಶಿವನ ಅನುಗ್ರಹಕ್ಕೆ ಕಾರಣರಾಗಿ, ಶೈವಮಾರ್ಗದಿಂದೆ ನಿಜಮೋಕ್ಷವ ಕಾಣದೆ, ಅಷ್ಟಾವರಣದ ಚಿದ್ಬೆಳಗ ಸೇರಿದ ಸದ್ಭಕ್ತಿ-ಜ್ಞಾನ-ವೈರಾಗ್ಯ, ಸತ್ಯ-ಸದಾಚಾರವನರಿಯದೆ, ಇಹಲೋಕದ ಭೋಗವ ಪರಲೋಕದ ಮೋಕ್ಷಾಪೇಕ್ಷೆಯಿಂದ ಎಡೆಯಾಡುತ್ತ, ಪುಣ್ಯ-ಪಾಪ, ಸುಖ-ದುಃಖ, ಸ್ತುತಿ-ನಿಂದೆ, ಸಿರಿ-ದರಿದ್ರ. ಆಶೆ-ಆಮಿಷ, ರೋಗ-ರುಜಿನಗಳಿಂದ, ಶಿವನೆ ಹರನೆ ಭವನೆಯೆಂದು ಗೋಳಿಡುವವರಿಗೆ, ನಿರಾಕಾರಪರಿಪೂರ್ಣ ಪರಶಿವನು ಆಗಳು ಹಿಂದಾಗಿ, ಶಿವಗಣವ ಸೇರುವಂತೆ ಯೋಗಾಭ್ಯಾಸವ ತೋರಿ, ಅನಂತಮಣಿಮಾಲೆ ಜಪಕ್ರಿಯಾನುಷ್ಠಾನ ಮಂತ್ರ-ತಂತ್ರ-ಯಂತ್ರ-ಯಜ್ಞಾದಿಗಳ ಹೇಳಿ, ಪರಮಾರಾಧ್ಯ ನಿರವಯಪ್ರಭು ಮಹಾಂತನ ಗಣಾಚಾರಕ್ಕೆ ಅಯೋಗ್ಯರೆನಿಸಿರ್ಪರು ಕಾಣಾ ಸಿದ್ಧಮಲ್ಲಿಕಾರ್ಜುಲಿಂಗೇಶ್ವರ.
--------------
ಮೂರುಸಾವಿರ ಮುಕ್ತಿಮುನಿ
ಬ್ರಹ್ಮ ವಿಷ್ಣು ರುದ್ರಾದಿಗಳ ಮೇಲೆ ಈಶ್ವರಲಿಂಗವ ಕಂಡೆನಯ್ಯ. ಆ ಈಶ್ವರನ ಅಂಗವ ಪೊಕ್ಕು ಸದಾಶಿವನ ಕಂಡೆನಯ್ಯ. ಆ ಸದಾಶಿವನ ಪೊಕ್ಕು ನಾನು ನೀನೆಂಬ ಉಭಯವಳಿದು ನಿರ್ವಯಲಲಿಂಗವನಾಚರಿಸುತಿರ್ದೆನಯ್ಯ ಝೇಂಕಾರ ನಿಜಲಿಂಗಪ್ರಭುವೆ.
--------------
ಜಕ್ಕಣಯ್ಯ
ಸರ್ವಬ್ರಹ್ಮಾಂಡವ ಒಬ್ಬ ದೇವ ನುಂಗಿಕೊಡಿಪ್ಪ ನೋಡಾ. ಆ ದೇವನ ನೆನಹಿನಿಂದ ಪರಶಿವನಾದ. ಆ ಪರಶಿವನ ಸಂಗದಿಂದ ಸದಾಶಿವನಾದ. ಆ ಸದಾಶಿವನ ಸಂಗದಿಂದ ಈಶ್ವರನಾದ. ಆ ಈಶ್ವರನ ಸಂಗದಿಂದ ರುದ್ರನಾದ. ಆ ರುದ್ರನ ಸಂಗದಿಂದ ವಿಷ್ಣುವಾದ. ಆ ವಿಷ್ಣುವಿನ ಸಂಗದಿಂದ ಬ್ರಹ್ಮನಾದ ಆ ಬ್ರಹ್ಮನ ಸಂಗದಿಂದ ಸಕಲ ಜಗಂಗಳು ಉತ್ಪತ್ತಿಯಾದವು ನೋಡಾ ಝೇಂಕಾರ ನಿಜಲಿಂಗಪ್ರಭುವೆ.
--------------
ಜಕ್ಕಣಯ್ಯ
ಆಧಾರದಲ್ಲಿ ಆಚಾರಲಿಂಗಕ್ಕೆ ಗೃಹಸ್ಥದಳವೇ ಸ್ಥಾನವು, ಸ್ವಾಧಿಷಾ*ನದಲ್ಲಿ ಗುರುಲಿಂಗಕ್ಕೆ ಅಧ್ಯಾಪನದಳವೇ ಸ್ಥಾನವು, ಮಣಿಪೂರಕದಲ್ಲಿ ಶಿವಲಿಂಗಕ್ಕೆ ನೇತ್ರದಳವೇ ಸ್ಥಾನವು. ಇದು ರೂಪನಿಷ*ಮಾಗಿರ್ಪುದರಿಂ ಅಂತಪ್ಪ ರೂಪವೇ ಸದ್ರೂಪಮಾದ ಶಕ್ತಿಯು, ಅಂತಪ್ಪ ಸದ್ರೂಪಸಂಸರ್ಗದಿಂ ತಮೋಮಧ್ಯದಲ್ಲಿದ್ದು ಗ್ರಹಿಸುವುದರಿಂ ನೇತ್ರಮಧ್ಯದಲ್ಲಿರ್ಪ ನೀಲಿಮಕ್ಕೆ ತಾರಕವೆಂದು ಹೆಸರು, ಅದೇ ಶಿವನಿರುವ ಸ್ಥಾನಮಾದುದರಿಂ ನೇತ್ರೇಂದ್ರಿಯವೇ ಪ್ರಧಾನಮಾಯಿತ್ತು. ಆ ಈಶ್ವರನ ನಿಜಸ್ಥಾನವೇ ತಾರಕವು. ಅನಾಹತದಲ್ಲಿ ಜಂಗಮಲಿಂಗಕ್ಕೆ ತನುದಳವೇ ಸ್ಥಾನವು, ವಿಶುದ್ಧದಲ್ಲಿ ಪ್ರಸಾದಲಿಂಗಕ್ಕೆ ಪ್ರಮಾಣದಳವೇ ಸ್ಥಾನವು, ಆಜ್ಞೇಯದಲ್ಲಿ ಮಹಾಲಿಂಗಕ್ಕೆ ಪ್ರಾಣದಳವೇ ಸ್ಥಾನವು. ಪ್ರಾಣದಲ್ಲಿ ಹಂಕಾರವೇ ಬೀಜವು, ಪ್ರಮಾಣದಲ್ಲಿ ಅಕಾರವೇ ಬೀಜವು, ತನುವಿನಲ್ಲಿ ಕಕಾರವೇ ಬೀಜವು, ನೇತ್ರದಲ್ಲಿ `ಣ'ಕಾರವೇ ಬೀಜವು, ಅಧ್ಯಾಪನದಲ್ಲಿ ಯಕಾರವೇ ಬೀಜವು, ಗೃಹಸ್ಥದಲ್ಲಿ ವಕಾರವೇ ಬೀಜವು. ವಿಶುದ್ಧಾಜ್ಞೇಯಗಳಲ್ಲಿರ್ಪ `ಅಹಂ'ಕಾರಗಳೇ ಕಾರಣ, ಅದು ವಿಪರೀತಿಸಿ ಅನಾಹತಮಣಿಪೂರಕಗಳಲ್ಲಿರ್ಪ `ಕಣ'ವೇ ಸೂಕ್ಷ್ಮ, ಸ್ವಾಧಿಷಾ*ನಾಧಾರಗಳಲ್ಲಿರ್ಪ `ಯಶ'ವೇ ಸ್ಥೂಲ. ಕಾರಣರೂಪಮಾದ `ಅಹಂ'ಕಾರವೇ ಜೀವನು, ಶೋಭನರೂಪಮಾಗಿ ಅವಧಿಯಿಲ್ಲದೆ ಗಮಿಸುತ್ತಿರ್ಪ `ಕಣ'ವೇ ಬಿಂದು, ಗೃಹಸ್ಥಸ್ಥಾನದಲ್ಲಿ ಆಚಾರಮುಖದಲ್ಲಿ ದೊಡ್ಡಿತ್ತಾಗಿಹುದೇ ಯಶ, ಮಹದ್ಬೀಜವೇ ಪ್ರಾಣ, ಅದಕ್ಕೆ ಪ್ರಾಣವೇ ತನು, ಆ ತನುವಿಗೆ ನೇತ್ರವೇ ಪ್ರಧಾನ, ಅದಕ್ಕುಪದೇಶವೇ ಪರಿಶುದ್ಧಿ, ಗೃಹಸ್ಥಧರ್ಮವೇ ಆ ಶರೀರಕ್ಕೆ ಪ್ರಕಾಶವು. ಅಹಂಕಾರರೂಪಮಾದ ಜೀವನಿಗೆ ಇಷ್ಟರೂಪಮಾದ `ಕ್ಷ' ಕಾರವೇ ಸಂಹಾರ, ಆ `ಹ'ಕಾರರೂಪಮಾದ ಪ್ರಾಣಕ್ಕೆ ವಿಸರ್ಗರೂಪಮಾದ ನಿಗ್ರಹಸ್ಥಾನವೇ ಸಂಹಾರ, `ಶ'ಕಾರರೂಪಮಾದ ತನುವಿಗೆ `ಠ'ಕಾರರೂಪಮಾದ ವ್ಯಯವೇ ಸಂಹಾರ, `ಣ'ಕಾರರೂಪಮಾದ ನೇತ್ರಕ್ಕೆ `ಪ'ಕಾರರೂಪಮಾದ ಗೋಪ್ಯವೇ ಸಂಹಾರ, `ಯ'ಕಾರರೂಪಮಾದ ಅಧ್ಯಾಪನೆಗೆ `ಲ'ಕಾರರೂಪಮಾದ ಪರಿಗ್ರಹವೇ ಸಂಹಾರ, `ಶ'ಕಾರರೂಪಮಾದ ಗೃಹಸ್ಥಕ್ಕೆ `ಸ'ಕಾರರೂಪಮಾದ ಸಂನ್ಯಾಸವೇ ಸಂಹಾರ. ಅಂತಪ್ಪ ಸಂನ್ಯಾಸವೇ ತೂರ್ಯ, ಅಂತಪ್ಪ ತೂರ್ಯದಲ್ಲಿ ಜೀವನ್ಮುಕ್ತಿಯಪ್ಪ ಸುಖವನೆನಗಿತ್ತು ಸಲಹಾ ಮಹಾಘನ ದೊಡ್ಡದೇಶಿಕಾರ್ಯಗುರುಪ್ರಭುವೆ.
--------------
ಮುಮ್ಮಡಿ ಕಾರ್ಯೇಂದ್ರ /ಮುಮ್ಮಡಿ ಕಾರ್ಯ ಕ್ಷಿತೀಂದ್ರ
ಉಂಡು ಕೊಂಡಾಡುವನ್ನ ಬರ, ವೇಶಿಯ ಮನೆಯ ದಾಸಿಯ [ಬರಿಹುಂಡವೆಂಬೆ], ಈಶ್ವರನ ರೂಪ ತೊಟ್ಟು ಕೈಯಾಂತು ಬೇಡಿದಡೆ, ವೇಷದ ಮರೆಯ ಬಲೆಯ ಬೀಸುವ ಬೇಟೆಗಾರನೆಂಬೆ, ಆಗಮವ ಕಲಿತು ಅವರಿಗೆ ಆಗಹೇಳಿ, ಹೋಗಿನ ದ್ರವ್ಯಕ್ಕೆ ಕೈಯಾನುವ ಈ ಲಾಗಿನ ಅಣ್ಣಗಳ ಬಗೆಯ ಭಕ್ತಿಯಲ್ಲಿ ಇದ್ದೆಹೆನೆಂಬವರಿಗೆ ಸತ್ತು ಸಾಯದ ಕುದುರೆಗೆ ಹುಲ್ಲನಡಕುವಂತಾಯಿತ್ತು, ನಿಃಕಳಂಕ ಮಲ್ಲಿಕಾರ್ಜುನಾ.
--------------
ಮೋಳಿಗೆ ಮಾರಯ್ಯ
ಇನ್ನಷ್ಟು ... -->