ಅಥವಾ

ಒಟ್ಟು 95 ಕಡೆಗಳಲ್ಲಿ , 25 ವಚನಕಾರರು , 82 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಭವಬಂಧನಂಗಳ ಹಿಂಗಿಸಬೇಕೆಂಬಣ್ಣಗಳು ನೀವು ಬಲ್ಲರೆ ಹೇಳಿರಿ, ಅರಿಯದಿದ್ದರೆ ಕೇಳಿರಿ. ಶ್ರೀಗುರುಪುತ್ರನಾಗಿ ಅವರು ತಮ್ಮ ಅಂತಃಕರಣ ಕೃಪೆಯಿಂದ ಪೇಳಿದ ಪ್ರಸಾದವಾಕ್ಯವನು ಅವರ ದಯದಿಂದ ಪೇಳುತಿರ್ದೆನು ಕೇಳಿರಯ್ಯ. ಅದೆಂತೆಂದಡೆ : ಆಶೆ ಆಮಿಷ ತಾಮಸದೊಡನೆ ಕೂಡಿ ಕ್ಲೇಶಪಡುತಿರ್ದಂತೆ ಗುರುಗಳಲ್ಲಿ ಅಥವಾ ಜಂಗಮಲಿಂಗಿಗಳಲ್ಲಿ ಇಂತೀ ಉಭಯ ಪಾಶಬದ್ಧರ ಕೈಯಿಂದ ಅಹಂಕಾರ ಮಮಕಾರದಲ್ಲಿ ಆಣವಮಲ, ಮಾಯಾಮಲ, ಕಾರ್ಮಿಕಮಲವೆಂಬ ಮಲತ್ರಯಂಗಳ ಕಚ್ಚಿ, ಸಂಸಾರವಿಷಯದಲ್ಲಿ ಲಂಪಟರಾದ ಭಕ್ತಜನಂಗಳು ಅಥವಾ ಶಿಷ್ಯೋತ್ತಮನಾದಂಥವರು ಇಂತಪ್ಪವರು ಲಿಂಗವ ಪಡೆದು, ಉಪದೇಶವ ಹಡದು, ಆಚರಿಸುವರ ಆಚರಣೆಯೆಂತಾಯಿತ್ತೆಂದಡೆ, ತಲೆಯಿಲ್ಲದ ಪುರುಷನ ಸಂಗ, ಕಣ್ಣಿಲ್ಲದ ಸ್ತ್ರೀ ಸಂಯೋಗವ ಮಾಡಿ, ಜೀವವಿಲ್ಲದೊಂದು ಮಗನ ಹಡದಂತಾಯಿತ್ತಯ್ಯ. ಅಂತಪ್ಪ ದೇವ ಭಕ್ತ ಗುರು ಶಿಷ್ಯರೆಂಬ ಈ ಚತುರ್ವಿಧ ಪುರುಷರಿಗೆ ಭವಹಿಂಗದು, ಮುಕ್ತಿ ಎಂದಿಗೂ ತೋರದು. ಅದೇನು ಕಾರಣವೆಂದಡೆ : ತಾವ್ಯಾರು, ತಮ್ಮ ಸ್ವರೂಪವಾವುದು ಎಂಬ ನಿಲುಕಡೆಯ ತಿಳಿಯದ ಕಾರಣ. ಮತ್ತಂ ಪೇಳ್ವೆ : ತಮ್ಮ ನಿಜವ ತಾವರಿದು, ಸರ್ವಾಚಾರಸಂಪತ್ತು ಅಳವಟ್ಟು, ಸರ್ವಾಂಗಲಿಂಗಮಯವಾಗಿರುವಂಥ ನಿಃಕಲ ಸದ್ರೂಪಸ್ವರೂಪರಾದ ಆಚಾರ್ಯಂಗಳಲ್ಲಾಗಲಿ, ಅಥವಾ ಸತ್ತುಚಿತ್ತಾನಂದ ನಿತ್ಯಪರಿಪೂರ್ಣಭರಿತನಾದ ನಿಃಕಲಪರಮಾನಂದಸ್ವರೂಪರಾದ ನಿರಂಜನಜಂಗಮದಲ್ಲಾಗಲಿ ಇಂತೀ ಉಭಯ ಪರಮೂರ್ತಿಗಳ ಕರುಣಕೃಪೆಯಿಂದ ಶಿವಜ್ಞಾನೋದಯವಾಗಿ ಸಕಲಪ್ರಪಂಚವನೆಲ್ಲವ ನಿವೃತ್ತಿಯ ಮಾಡಿ ಲಿಂಗಾಂಗಸಮರಸದನುಭವವಳವಟ್ಟು ತ್ರಿವಿಧ ವಂಚನೆಯಿಲ್ಲದೆ ಕ್ಷಮೆ, ದಮೆ, ಶಾಂತಿ, ಸೈರಣೆ ಗುಣವುಳ್ಳಂಥ ಸದ್ಭಕ್ತ ಶರಣಜನಂಗಳಲ್ಲಾಗಲಿ ಅಥವಾ ಶಿಷ್ಯೋತ್ತಮನಾದಂಥವರುಗಳಲ್ಲಾಗಲಿ ಇಂತೀ ಉಭಯ ಭಕ್ತಗಣಂಗಳು ಚಿದ್ಘನಮಹಾಲಿಂಗವೆಂಬ ಇಷ್ಟಲಿಂಗವ ಕರಸ್ಥಲಕ್ಕೆ ಪಡಕೊಂಡು, ತಾರಕಮಂತ್ರವೆಂಬ ಮಂತ್ರೋಪದೇಶವ ಹಡಕೊಂಡು, ಆಚರಿಸುವ ಸದ್ಭಕ್ತ ಶರಣಜನಂಗಳ ಆಚರಣೆಯೆಂತಾಯಿತ್ತಯ್ಯಯೆಂದಡೆ: ಸೂರ್ಯಪ್ರಕಾಶವನುಳ್ಳಂಥ ಕನ್ಯಕುಮಾರ ರಾಜನಸಂಗ ಚಂದ್ರಕಾಂತಿಪ್ರಕಾಶವನುಳ್ಳಂಥ ಕನ್ಯಸ್ತ್ರೀಯಳು ಸಂಯೋಗವ ಮಾಡಿ ಅಗ್ನಿಕಾಂತಿಪ್ರಕಾಶವನುಳ್ಳಂಥ ಪುತ್ರನ ಹಡೆದಂತಾಯಿತ್ತಯ್ಯ. ಇಂತಪ್ಪ ಆಚಾರವನುಳ್ಳ ಗುರು ಶಿಷ್ಯರು ದೇವ ಭಕ್ತರೆಂಬ ಈ ನಾಲ್ಕು ಪರಪುರುಷರಿಗೆ ಭವಹಿಂಗುವುದು. ಮುಕ್ತಿಯೆಂಬುದು ಕರತಳಾಮಳಕವಾಗಿ ತೋರುವುದು. ಮತ್ತಂ, ಲಿಂಗಾಂಗಸಂಬಂದ್ಥಿಯಾಗಿ ಸರ್ವಾಚಾರ ನೆಲೆಗೊಂಡು ಸರ್ವಾಗಲಿಂಗಿಯಾದಂಥ ವೀರಮಾಹೇಶ್ವರರಾಗಲಿ, ಅಥವಾ ಗುರುಗಳಾಗಲಿ, ಸದ್ಭಕ್ತ ಶರಣಜನಂಗಳಾಗಲಿ, ಇಂತಪ್ಪ ತ್ರಿವಿಧಶಿವಜ್ಞಾನಿಗಳ ಚರಣಕಮಲಕ್ಕೆ ದೀರ್ಘದಂಡನಮಸ್ಕಾರಮಂ ಮಾಡಿ ಸುಜ್ಞಾನೋದಯವಾಗಿ ಮೋಕ್ಷವ ಹಡೆಯಬೇಕೆಂಬ ಜ್ಞಾನಕಲಾತ್ಮರಾದಂಥವರು ಲಿಂಗಾಂಗಸಮರಸದನುಭಾವವ ವಿಚಾರಿಸಿಕೊಳ್ಳಬೇಕು. ಅಂತಪ್ಪ ಪರಶಿವಮೂರ್ತಿಗಳಾದ ಗುರುಗಳಲ್ಲಾಗಲಿ, ಅಥವಾ ಜಂಗಮಲಿಂಗಿಗಳಲ್ಲಾಗಲಿ, ಅಥವಾ ಇಂತಹ ಶಿವಜ್ಞಾನಿಗಳಾದ ಭಕ್ತರಲ್ಲಾಗಲಿ, ಶಿಷ್ಯೋತ್ತಮರಲ್ಲಾಗಲಿ, ಇಂತಪ್ಪವರಿಗೆ ಲಿಂಗಾಂಗಸಮರಸವ ತೋರಬೇಕು, ತೋರದಿದ್ದರೆ ಪ್ರಮಥರು ಮೆಚ್ಚರು. ಇಂತಪ್ಪ ತ್ರಿಮೂರ್ತಿಗಳು ಹೇಳಿದ ಹಾಂಗೆ ಕೇಳಿ ವಿಶ್ವಾಸದಿಂದ ಆಚರಿಸದಿದ್ದರೆ ಭವಹಿಂಗದು ಮುಕ್ತಿಯೆಂಬುದು ಎಂದೆಂದಿಗೂ ತೋರದು ಎಂದನಯ್ಯಾ ನಿಮ್ಮ ಶರಣ ಕಾಡನೊಳಗಾದ ಶಂಕರಪ್ರಿಯ ಚನ್ನಕದಂಬಲಿಂಗ ನಿರ್ಮಾಯಪ್ರಭುವೆ.
--------------
ಕಾಡಸಿದ್ಧೇಶ್ವರ
ಶ್ರೀಗುರುವಾದಾತನು ಸಕಲಾಗಮಂಗಳ ಹೃದಯವನರಿತು ತನ್ನ ತಾನರಿದು ಸರ್ವಾಚಾರ ತನ್ನಲ್ಲಿ ನೆಲೆಗೊಂಡು ಉಪದೇಶವ ಮಾಡುವ ಕ್ರಮವೆಂತೆಂದಡೆ: ಬ್ರಾಹ್ಮಣನ ಮೂರು ವರುಷ ನೋಡಬೇಕು, ಕ್ಷತ್ರಿಯನ ಆರು ವರುಷ ನೋಡಬೇಕು, ವೈಶ್ಯನ ಒಂಬತ್ತು ವರುಷ ನೋಡಬೇಕು, ಶೂದ್ರನ ಹನ್ನೆರಡು ವರುಷ ನೋಡಬೇಕು, ನೋಡಿದಲ್ಲದೆ ದೀಕ್ಷೆ ಕೊಡಬಾರದು _ ವೀರಾಗಮೇ. ``ಬ್ರಾಹ್ಮಣಂ ತ್ರೀಣಿ ವರ್ಷಾಣಿ ಷಡಬ್ದಂ ಕ್ಷತ್ರಿಯಂ ತಥಾ ವೈಶ್ಯಂ ನವಾಬ್ದಮಾಖ್ಯಾತಂ ಶೂದ್ರಂ ದ್ವಾದಶವರ್ಷಕಂ ಈ ಕ್ರಮವನರಿಯದೆ, ಉಪಾಧಿವಿಡಿದು ಉಪದೇಶವ ಮಾಡುವಾತ ಗುರುವಲ್ಲ, ಉಪಾಧಿವಿಡಿದು ಉಪದೇಶವ ಮಾಡಿಸಿಕೊಂಬಾತ ಶಿಷ್ಯನಲ್ಲ. ಇವರಿಬ್ಬರ ನಿಲವು ಒಂದೆ ಠಕ್ಕನ ಮನೆಗೆ ಠಕ್ಕ ಬಿದ್ದಿನ ಬಂದಂತೆ ಈ ಗುರುಶಿಷ್ಯರಿಬ್ಬರನು ರೌರವನರಕದಲ್ಲಿಕ್ಕುವ ಕೂಡಲಚೆನ್ನಸಂಗಯ್ಯ.
--------------
ಚನ್ನಬಸವಣ್ಣ
ಬಹುಜನ್ಮಭಾರಿಗಳ ಕರತಂದು ಹಿರಿಯತನದಾಸೆಗೆ ಹರಿದು ಉಪದೇಶವ ಕೊಟ್ಟರೆ ಗುರುಶಿಷ್ಯಭಾವ ಸರಿಯಪ್ಪುದೆ ? ಕಣ್ಣಿಲ್ಲದ ಗುರು, ಕುರುಡ ಶಿಷ್ಯ, ಅವರಿಗಾಚಾರ ವಿಚಾರ ಸಮಯಾಚಾರಸಂಬಂಧವೆಂತಪ್ಪುದಯ್ಯಾ, ಭೂತ ಅದ್ಭೂತ ಅವಿಚಾರ ಘಟಿತರಿಗೆ ಗುರುನಿರಂಜನ ಚನ್ನಬಸವಲಿಂಗಾ ?
--------------
ದೇಶಿಕೇಂದ್ರ ಸಂಗನಬಸವಯ್ಯ
ಕೊರಡು ಕೊನರಾಗಬಲ್ಲುದೇ? ಬರಡು ಹಯನಾಗಬಲ್ಲುದೇ ಅಯ್ಯಾ? ಕುರುಡಗೆ ಕನ್ನಡಿಯ ತೋರಿದಡೆ ನೋಡಬಲ್ಲನೆ? ಮೂಗಗೆ ರಾಗವ ಹೇಳಿದರೆ ಹಾಡಬಲ್ಲನೆ ಅಯ್ಯ? ಹೇಗ ಬುದ್ಧಿಯ ಬಲ್ಲನೇ ಅಯ್ಯ? ಲೋಗರಿಗೆ ಉಪದೇಶವ ಹೇಳಿದರೆ ಶಿವಸತ್ಪಥದ ಹಾದಿಯ ಬಲ್ಲರೇ ಅಯ್ಯ?. ಇದು ಕಾರಣ, ಶಿವ ಸತ್ಪಥದ ಆಗೆಂಬುದು ಶಿವಜ್ಞಾನಸಂಪನ್ನಂಗಲ್ಲದೆ ಸಾಧ್ಯವಲ್ಲ ಕಾಣ. ಅಸಾಧ್ಯವಸ್ತುವಿನೊಳಗಣ ಐಕ್ಯ ಅವಿವೇಕಗಳಿಗೆ ಅಳವಡುವುದೇ ನಮ್ಮವರಿಗಲ್ಲದೆ?, ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.
--------------
ತೋಂಟದ ಸಿದ್ಧಲಿಂಗ ಶಿವಯೋಗಿಗಳು
ಗುರುವೆಂಬಾತ ಶಿಷ್ಯನಂತುವನರಿಯ, ಶಿಷ್ಯನೆಂಬಾತ ಗುರುವನಂತುವನರಿಯ. ಗುರುವಿನಲ್ಲಿ ಸಮವಿಲ್ಲ, ಶಿಷ್ಯನಲ್ಲಿ ಸಮವಿಲ್ಲ, ಜಂಗಮ ಜಂಗಮದಲ್ಲಿ ಸಮವಿಲ್ಲ, ಭಕ್ತ ಭಕ್ತನಲ್ಲಿ ಸಮವಿಲ್ಲ. ಇದು ಕಾರಣ ಕಲಿಯುಗದಲ್ಲಿ ಉಪದೇಶವ ಮಾಡುವ ಕಾಳುಕುರಿಕೆಯ ಮಕ್ಕಳನೇನೆಂಬೆ ಗುಹೇಶ್ವರಾ.
--------------
ಅಲ್ಲಮಪ್ರಭುದೇವರು
ಇಂತಪ್ಪ ನಿರ್ಣಯವನು ಸ್ವಾನುಭಾವ ಗುರುಮುಖದಿಂ ತಿಳಿದು ವಿಚಾರಿಸಿಕೊಳ್ಳದೆ, ಬ್ಥಿನ್ನಗುರುವಿನ ಕೈಯಲ್ಲಿ ಉಪದೇಶವ ಹಡದು, ಲಿಂಗವ ಪಡಕೊಂಡು ಗುರುಕಾರುಣ್ಯ ಉಳ್ಳವರೆಂದು ಲೋಕದ ಮುಂದೆ ಬೊಗಳುವ ಮೂಳಹೊಲೆಯರ ಕಟಬಾಯ ಸೀಳಿ ನಿಮ್ಮ ಗಣಂಗಳ ಪಾದರಕ್ಷೆಯಿಂದ ಹೊಡೆದಡೆ, ಎನ್ನ ಸಿಟ್ಟು ಮಾಣದು. ಅದೇನು ಕಾರಣವೆಂದಡೆ, ನೀವು ಪಡಕೊಂಡ ಗುರುವಿಗೆ ಗುರುಕಾರುಣ್ಯವಿಲ್ಲ. ಅವನ ಗುರುವಿಗೆ ಮುನ್ನವೇ ಗುರುಕಾರುಣ್ಯವಿಲ್ಲ. ನಿಮಗಿನ್ನಾವ ಕಡೆಯ ಗುರುಕಾರುಣ್ಯವೊ? ಎಲೆ ಮರುಳ ಮಾನವರಿರಾ ಗುರುಕಾರುಣ್ಯವಾದ ಬಳಿಕ ತನು-ಮನ-ಧನದಾಸೆ ಹಿಂದುಳಿದು ಗುರು-ಲಿಂಗ-ಜಂಗಮದಾಶೆ ಮುಂದುಗೊಂಡಿರಬೇಕು. ಗುರುಕಾರುಣ್ಯವಾದಡೆ ಆಣವಮಲ, ಮಾಯಾಮಲ, ಕಾರ್ಮಿಕಮಲಗಳ ಜರಿದು ಇಷ್ಟ-ಪ್ರಾಣ-ಭಾವದಲ್ಲಿ ಭರಿತವಾಗಬೇಕು. ಗುರುಕಾರುಣ್ಯವಾದಡೆ ಲಿಂಗವು ಆರಿಗೂ ತೋರದಿರಬೇಕು. ಇಷ್ಟುಳ್ಳಾತನೆ ಗುರುಕಾರುಣ್ಯ ಉಳ್ಳವನೆಂದನಯ್ಯಾ ನಿಮ್ಮ ಶರಣ ಕಾಡನೊಳಗಾದ ಶಂಕರಪ್ರಿಯ ಚನ್ನಕದಂಬಲಿಂಗ ನಿರ್ಮಾಯಪ್ರಭುವೆ.
--------------
ಕಾಡಸಿದ್ಧೇಶ್ವರ
ಶಿವಶಿವಾ, ಈ ಲೋಕದ ಮಾನವರನೇನೆಂಬೆನಯ್ಯಾ. ಅದೆಂತೆಂದಡೆ: ನಾವು ಗುರುಗಳು, ನಾವು ಲಿಂಗಾಂಗಿಗಳು, ನಾವು ಜಂಗಮಲಿಂಗಿಗಳು, ನಾವು ಸದಾಚಾರಸದ್ಭಕ್ತರು ಎಂಬರಯ್ಯ. ಇಂತಿವರ ನಡತೆ ಆಚರಣೆಯೆಂತಾಯಿತೆಂದಡೆ: ಒಬ್ಬಾನೊಬ್ಬ ಜಾತಿಹಾಸ್ಯಗಾರನು ವೇಷವ ಧರಿಸಿಕೊಂಡು ಪುರಜನರ ಮೆಚ್ಚಿಸಿ, ತನ್ನ ಒಡಲಹೊರವಂತೆ, ವಿಭೂತಿ ರುದ್ರಾಕ್ಷಿ ಕಾವಿ ಕಾಷಾಂಬರ ಮುಂತಾಗಿ ವೇಷವ ಧರಿಸಿ, ಗುರು-ಹಿರಿಯರು ಜಂಗಮಲಿಂಗಿಗಳೆಂದು ನಾಮವ ತಾಳಿ, ಭಕ್ತರಿಗೆ ಸದಾಚಾರಮಾರ್ಗವ ಹೇಳೇವು, ಸದಮಲದ ಬೆಳಗ ತೋರೇವು ಎಂದು ಧನಿಕರಿದ್ದೆಡೆಗೆ ಬಂದು, ನಿಮಗೆ ಉಪದೇಶವ ಹೇಳಿ, ಲಿಂಗಾಂಗಸಮರಸವ ತೋರಿ, ಮಾಂಸಪಿಂಡವಳಿದು ಮಂತ್ರಪಿಂಡವ ಮಾಡೇವು ಎಂದು ಹೇಳಿ, ಆ ಭಕ್ತರ ಕೈಯಲ್ಲಿ ಅನ್ನ ಹಚ್ಚಡ ಹೊನ್ನು ವಸ್ತ್ರವ ತೆಗೆದುಕೊಂಡು ಆ ಜಾತಿಕಾರನ ಹಾಗೆ ಇವರು ತಮ್ಮ ಉದರಾಗ್ನಿ ಅಡಗಿಸಿಕೊಂಬುವರಲ್ಲದೆ ಇಂತಪ್ಪ ಗುರು-ಶಿಷ್ಯರ, ದೇವ-ಭಕ್ತರೆಂಬುಭಯರ ಆಚರಣೆಯೆಂತಾಯಿತ್ತೆಂದೊಡೆ- ಹಂದಿಯ ಬಾಯೊಳಗಿನ ತುತ್ತ ನಾಯಿ ಬಂದು ಕಚ್ಚಿದಂತೆ. ಅದೆಂತೆಂದೊಡೆ: ಜೀವನಬುದ್ಭಿಯುಳ್ಳ ಗುರುವೆಂದಾತ ಹಂದಿ, ಕರಣಬುದ್ಧಿಯುಳ್ಳ ಶಿಷ್ಯನೆಂಬಾತ ನಾಯಿ. ಇಂತಪ್ಪ ಗುರು-ಶಿಷ್ಯರ ಸಮ್ಮೇಲನವು ಹುಟ್ಟುಗುರುಡನ ಕೈಯ ಕಟ್ಟಿ ಲೊಟ್ಟಿಗಣ್ಣವ ಪಿಡಿದು ಕಾಣದೆ ಕಮ್ಮರಿಬಿದ್ದಂತಾಯಿತಯ್ಯ. ಅದೇನು ಕಾರಣವೆಂದಡೆ, ಗುರುವಿನಂತ ಶಿಷ್ಯನರಿಯ, ಶಿಷ್ಯನಂತ ಗುರುವರಿಯ, ಜಂಗಮನಂತ ಭಕ್ತನರಿಯ, ಭಕ್ತನಂತ ಜಂಗಮವರಿಯದ ಕಾರಣ. ಉಪಾದ್ಥಿಯುಳ್ಳವರು ಗುರುವಲ್ಲ ಶಿಷ್ಯರಲ್ಲ. ಉಪಾದ್ಥಿಯುಳ್ಳವರಲ್ಲಿ ಉಪದೇಶವ ಹಡಿಯಬೇಕೆಂಬವರ, ಉಪಾದ್ಥಿಯುಳ್ಳವರಿಗೆ ಉಪದೇಶವ ಹೇಳಬೇಕೆಂಬವರ, ಈ ಉಭಯಭ್ರಷ್ಟ ಹೊಲೆಮಾದಿಗರ ಸೂರ್ಯಚಂದ್ರರು ಅಳಿದುಹೋಗುವ ಪರಿಯಂತರವು ಹಂದಿ ನಾಯಿಯ ನರಕದಲ್ಲಿಕ್ಕದೆ ಬಿಡನೆಂದಾತ ವೀರಾದ್ಥಿವೀರ ನಿಮ್ಮ ಶರಣ ಕಾಡನೊಳಗಾದ ಶಂಕರಪ್ರಿಯ ಚನ್ನಕದಂಬಲಿಂಗ ನಿರ್ಮಾಯಪ್ರಭುವೆ.
--------------
ಕಾಡಸಿದ್ಧೇಶ್ವರ
ಗುರು-ಲಿಂಗ-ಜಂಗಮವೆಂದರಿಯದ ಗೊಡ್ಡುಗಳ ಶಿಷ್ಯನ ಮಾಡಿಕೊಂಬುವ ಹೆಡ್ಡಜಡಜೀವಿಗಳನೇನೆಂಬೆನಯ್ಯ ! ಆಚಾರ-ಅನಾಚಾರದ ಭೇದವನರಿಯದ ಹೆಡ್ಡ ಮಾನವರಿಗೆ ಉಪದೇಶವ ಕೊಡುವ ಮತಿಭ್ರಷ್ಟರನೇನೆಂಬೆನಯ್ಯ ! ಅವನ ಅಜ್ಞಾನವನಳಿಯದೆ, ಅವನ ನಡೆನುಡಿಯ ಹಸ ಮಾಡದೆ, ಅವನ ಆದಿ-ಅಂತ್ಯವ ತಿಳಿಯದೆ, ಧನಧಾನ್ಯದ್ರವ್ಯದಾಸೆಗೆ ಶಿವದೀಕ್ಷೆಯ ಮಾಡುವನೊಬ್ಬ ಗುರುವ ಹುಟ್ಟಂಧಕನೆಂಬೆನಯ್ಯ ! ತನ್ನ ಗುರುತ್ವವನರಿಯದ ಗುರುವಿಂದ ಉಪದೇಶವ ಪಡವನೊಬ್ಬ ಶಿಷ್ಯನ ಕೆಟ್ಟಗಣ್ಣವನೆಂಬೆನಯ್ಯ ! ಇಂತಿವರ ಗುರು-ಶಿಷ್ಯರೆಂದಡೆ ನಮ್ಮ ಪ್ರಮಥರು ಮಚ್ಚರಯ್ಯ ! ನಮ್ಮ ಪ್ರಮಥರು ಮಚ್ಚದಲ್ಲಿ ಇಂತಪ್ಪ ಗುರುಶಿಷ್ಯರಿಬ್ಬರಿಗೆಯೂ ಯಮದಂಡಣೆ ತಪ್ಪದೆಂದಾತನಂಬಿಗರ ಚೌಡಯ್ಯನು.
--------------
ಅಂಬಿಗರ ಚೌಡಯ್ಯ
ಧರೆಯ ಮೇಲೆ ಹರಡಿರುವ ಶಿಲೆಯ ತಂದು ಕಲ್ಲುಕುಟಿಕ ಕಟೆದು ಲಿಂಗವ ಮಾಡಿದರೆ ಅದೆಂತು ಲಿಂಗವೆಂಬೆನಯ್ಯ ? ಅದು ಶಿಲೆಯು. ಆ ಲಿಂಗವ ತಂದು, ಗುರುವಿನ ಕೈಯಲ್ಲಿ ಕೊಟ್ಟು ದೀಕ್ಷೆ ಉಪದೇಶವಂ ಮಾಡಿ, ಆ ಲಿಂಗವ ಧರಿಸಿಕೊಂಡು ಗುರು ಲಿಂಗ ಜಂಗಮ ಪಾದೋದಕ ಪ್ರಸಾದವ ಸ್ವೀಕರಿಸಿ, ಶಿಲಾಲಿಖಿತವ ತೊಡೆದು ಕಲಾಭೇದವನರಿದು ಇಷ್ಟಲಿಂಗ ಪ್ರಾಣಲಿಂಗ ಭಾವಲಿಂಗವೆಂಬ ಲಿಂಗತ್ರಯಗಳನರಿದು ಇರಬಲ್ಲ ಶರಣರ ಎನಗೊಮ್ಮೆ ತೋರಿಸಯ್ಯ ಝೇಂಕಾರ ನಿಜಲಿಂಗಪ್ರಭುವೆ.
--------------
ಜಕ್ಕಣಯ್ಯ
ಉಪದೇಶವ ಮಾಡಿದ ಗುರುವೊಂದೆ ಲಿಂಗವೊಂದೆಯಲ್ಲದೆ, ಸತಿಗೊಂದು ಲಿಂಗ, ಸುತಗೊಂದು ಲಿಂಗ, ಸೋದರಗೊಂದು ಲಿಂಗ, ದಾಸಿಗೊಂದು ಲಿಂಗ, ಇಂತು ಒಂದು ಮನೆಗೆ ಗುರುಲಿಂಗವನೆರಡು ಮಾಡಿದರೆ ಮೆಚ್ಚರು, ನಮ್ಮ ಕೂಡಲಚೆನ್ನಸಂಗನ ಶರಣರು.
--------------
ಚನ್ನಬಸವಣ್ಣ
ಹೆಸರಿಡಬಾದ ಲಿಂಗವ ಹೆಸರಿಟ್ಟು ಎನ್ನ ಕರಸ್ಥಲಕ್ಕೆ ತಂದು ಕರತಳಾಮಳಕದಂತೆ ಮಾಡಿ ಎನ್ನ ಕರಸ್ಥಲಕ್ಕೆ ಕ್ರಿಯಾಲಿಂಗವ ಕೊಟ್ಟ. ಶ್ರೀಗುರು ಚೆನ್ನ ಬಸವಣ್ಣ ಹೆಸರಿಟ್ಟ ಲಿಂಗದ ಹೆಸರ ಹೇಳುವೆ ಕೇಳಯ್ಯಾ. ಕಂಜಕರ್ಣಿಕೆಯ ಹಣೆಯಲ್ಲಿ ವಿಹತ್ತವಸವೆಂದು ಬರೆದ ಐದಕ್ಷರವೆ ಆತನ ಪ್ರಣವನಾಮ. ಅವ್ಯಯ ಕರದೊಳಿಪ್ಪ ಆರಕ್ಷರ ಆತನ ದ್ವಿತೀಯ ನಾಮ. ಅವ್ಯಯ ಆನಂದ ಮಸ್ತಕದೊಳಿಪ್ಪ ಅಕ್ಷರವೆ ಆತನ ಆಚಾರ್ಯನಾಮ. ಎಂತೀ ನಾಮತ್ರಯಂಗಳನರಿದು ಧ್ಯಾರೂಢನಾಗಿ ಮಾಡುವರು ಎತ್ತಾನಿಕೊಬ್ಬರು. ಈ ಬಸವಣ್ಣ ಮೊದಲಾದ ಪುರಾತರು ಆ ಅವ್ಯಯ ಅನುಮತದಿಂದ ಲಿಂಗಾರ್ಚನೆಯ ಮಾಡಿ ನಿತ್ಯ ನಿಜನಿವಾಸಿಗಲಾದರು. ಆ ಶರಣರ ಅನುಮತದರಿವಿನ ಉಪದೇಶವ ಕೇಳಿ, ಎನಗಿನ್ನಾವುದು ಹದನವಯ್ಯಾ ಎಂಬ ಚಿಂತೆಯ ಬಿಟ್ಟು ಕಪಿಲಸಿದ್ಧಮಲ್ಲಿಕಾರ್ಜುನಯ್ಯನ ಕೈಯಲ್ಲಿ ಪಿಡಿದೆನು.
--------------
ಸಿದ್ಧರಾಮೇಶ್ವರ
ಕಾಡೊಳಗಣ ಹುಲುಗಿಣಿಯ ಹಿಡಿತಂದು, `ಓಂ ನಮಃಶಿವಾಯ, ಹರಹರ ಶಿವಶಿವ' ಎಂದು ಓದಿಸಿದಡೆ ಓದದೇ? ನಿಚ್ಚ ನಿಚ್ಚ ನರಾರಣ್ಯದೊಳಗಿದ್ದ ಮನುಷ್ಯರ ಹಿಡಿತಂದು, ಹಿರಿದು ಪರಿಯಲ್ಲಿ ಉಪದೇಶವ ಮಾಡಿ, ಶಿವಮಂತ್ರೋಪದೇಶವ ಹೇಳಿದಡೆ, ಅದ ಮರೆದು, ಕಾಳ್ನುಡಿಯ ನುಡಿವವರು, ಹುಲುಗಿಣಿಯಿಂದ ಕಷ್ಟ ಕಾಣಾ, ನಿಜಗುರು ಸ್ವತಂತ್ರಸಿದ್ಧಲಿಂಗೇಶ್ವರಾ.
--------------
ಸ್ವತಂತ್ರ ಸಿದ್ಧಲಿಂಗ
ಗುರುವಿನಿಂದ ಉಪದೇಶವ ಪಡೆದು, ಗುರುಪುತ್ರನೆನಿಸಿಕೊಂಡ ಬಳಿಕ ಪೂರ್ವದ ತಾಯಿತಂದೆಯೆಂದು, ಬಂಧುಗಳೆಂದು, ಮಲಸಂಬಂಧವ ನೆನೆಯಲಾಗದು ಕಾಣಿರೊ. ಇನ್ನಿವ ನೆನೆದಿರಾದರೆ ಶಿವದ್ರೋಹ ತಪ್ಪದಯ್ಯ. ಇನ್ನು ನಿಮಗೆ ತಾಯಿ ತಂದೆಗಳ ಹೇಳಿಹೆ ಕೇಳಿರೆ. ಗುರುವೇ ತಾಯಿ, ಗುರುವೇ ತಂದೆ, ಗುರುವೇ ಬಂಧುಗಳು. ಗುರುವಿನಿಂದ ಪರವಿನ್ನಾರೂ ಇಲ್ಲವೆಂದು ನಂಬಬಲ್ಲರೆ ಶಿಷ್ಯನೆಂಬೆನಯ್ಯಾ. ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.
--------------
ತೋಂಟದ ಸಿದ್ಧಲಿಂಗ ಶಿವಯೋಗಿಗಳು
ಅಂಗದ ಮೇಲೆ ಲಿಂಗಸಾಹಿತ್ಯವನುಳ್ಳ ಭಕ್ತಾಂಗನೆಯರು ತಮ್ಮ ಲಿಂಗಶರೀರಂಗ? ಮಧ್ಯದಲ್ಲಿ ಹರಭಕ್ತಿಗೆ ಹೊರಗಾದ ಅಸು[ರಾಂಶಿ] ಕವಪ್ಪ ಹಸುರು ಹಚ್ಚೆಗಳೆಂಬ ಪತಿತ ಲೇಖನ ಇವಾದಿಯಾದ ಅನ್ಯ ಚಿಹ್ನೆಗಳನು ಅಂಕಿತಧಾರಣ ಲೇಖನಂಗ? ಮಾಡಿಕೊಂಡು ಮತ್ತೆ ತಾವು ಲಿಂಗವನರ್ಚಿಸಿ ಭಕ್ತರಾದೆವೆಂಬ ಈ ಭಂಗಮಾರಿ ಹೊಲೆಜಂಗುಳಿಗಳಿಗೆ ಉಪದೇಶವ ಕೊಟ್ಟ ಗುರು, ಪ್ರಸಾದ ನೀಡುವ ಜಂಗಮ, ಅವರಗೊಡಗೂಡಿಕೊಂಡು ನಡೆವ ಭಕ್ತತತಿ ಈ ಚತುರ್ವಿಧರು ಶ್ವಪಚಗೃಹದ ಶ್ವಾನಯೋನಿಗಳಲ್ಲಿ ಶತಸಹಸ್ರ ವೇಳೆ ಬಂದು ನರಕವಿಪ್ಪತ್ತೆಂಟುಕೋಟಿಯನೈದುವರು, ಅದೆಂತೆಂದೊಡೆ: ``ಭಕ್ತನಾರೀ ಸ್ವಯಾಂಗೇಷು ಪತಿತಾದ್ಯನ್ಯ ಚಿಹ್ನೆಯೇತ್ ಲೇಖನಾಂಕಂ ಯದಿ ಕೃತ್ವಾ ತೇ[s]ಪಿ ಸ್ತ್ರೀ ಪತಿತ ಸ್ತ್ರೀಣಾಂ ತಸ್ಯೋಪದೇಶಶೇಷಂಚ ದತ್ವಾಶ್ಚೈ ಗುರುಃ ಚರಾನ್ ತಪತ್ಸಂಗ ಸಯೋದ್ಭಕ್ತಾ ತದಾದಿ ಚತುರಾನ್ವಯಂ ಶ್ವಾನಯೋನಿ ಶತಂ ಗತ್ವಾ ಚಾಂಡಾಲಗೃಹಮಾಚರೇತ್ ಅಷ್ಟವಿಂಶತಿಕೋಟ್ಯಸ್ತು ನರಕಂ ಯಾತಿ ಸಧ್ರುವಂ ಇಂತೆಂದುದಾಗಿ ಇದು ಕಾರಣ ಇಂತಪ್ಪ ಅನಾಚಾರಿಗಳನು ಕೂಡಲಚೆನ್ನಸಂಗಯ್ಯ ಅಘೋರ ನರಕದಲ್ಲಿಕ್ಕುವ.
--------------
ಚನ್ನಬಸವಣ್ಣ
ಬಸವೇಶ್ವರದೇವರು ತೃಣಪುರುಷನ ಮಾಡಿ `ಮೀಮಾಂಸಕಂಗೆ ಉತ್ತರವ ಕೊಡು ಹೋಗು' ಎನಲು ಆ ತೃಣಪುರುಷನು ಮಹಾಪ್ರಸಾದವೆಂದು ಕೈಕೊಂಡು, ಮೀಮಾಂಸಕಂಗೆ ಉತ್ತರವ ಕೊಟ್ಟು ಶಿವವಿರಹಿತವಾದ ಕಾಳ್ಪುರಾಣವೆಲ್ಲವ ಬಯಲು ಮಾಡಿ ನುಡಿಯಲು ಆತಂಗೆ ಶಿವಜ್ಞಾನ ತಲೆದೋರಿ, ಆ ಬಸವೇಶಂಗೆ ವಂದನಂಗೈದು ಉಪದೇಶವ ಮಾಡಬೇಕೆನಲು, ಆತಂಗೆ ವೀರಶೈವದೀಕ್ಷೆಯ ಮಾಡಿ ಷಟ್‍ಸ್ಥಲಮಾರ್ಗ ಕ್ರೀಯ ನಿರೂಪಿಸಿ ತಿಳುಹಲು `ಎಲೆ ಬಸವೇಶ್ವರಾ ಜಂಗಮದ ಪಾದತೀರ್ಥಪ್ರಸಾದವ ಲಿಂಗಕ್ಕೆ ಕೊಟ್ಟುಕೊಳಬಹುದೆರಿಱ ಎಂದು ಕೇಳಲು, ಕೇಳೈ ಮೀಮಾಂಸಕಾ, ಪೂರ್ವದಲ್ಲಿ ಪರಮೇಶ್ವರನು ಸಮಸ್ತ ದೇವತೆಗಳು ಒಡ್ಡೋಲಗದಲ್ಲಿರಲು ಸೂತ್ರಿಕನೆಂಬ ಶೈವಾಚಾರ್ಯನು `` ಎಲೆ ಪರಮೇಶ್ವರಾ ಜಂಗಮದ ಪಾದತೀರ್ಥಪ್ರಸಾದವ ಲಿಂಗಕ್ಕೆ ಕೊಡಬಹುದೆರಿ' ಎನಲು `ಎಲೆ ಸೂತ್ರಿಕನೆ ಕೇಳು ನಾನೆಂದಡೆಯೂ ಜಂಗಮವೆಂದಡೆಯೂ ಬೇರಿಲ್ಲ ಅದು ಕಾರಣ ಜಂಗಮವೆ ಅಧಿಕ. ನೀನಾ ಜಂಗಮಲಿಂಗದ ಪಾದತೀರ್ಥಪ್ರಸಾದವ ಲಿಂಗಕ್ಕೆ ಕೊಡಬಾರದೆಂದು ನಿಂದಿಸಿ ನುಡಿದ ವಾಗ್ದೋಷಕ್ಕೆ ಮತ್ರ್ಯಕ್ಕೆ ಹೋಗಿ ಹೊಲೆಯನ ಮನೆಯ ಸೂಕರನ ಬಸುರಲ್ಲಿ ಹುಟ್ಟಿ ಹದಿನೆಂಟು ಜಾತಿಯ ಅಶುದ್ಧವನು ನಾಲಗೆಯಲಿ ಭುಂಜಿಸಿ ನರಕಜೀವಿಯಾಗಿರುಱಱ ಎಂದುದೆ ಸಾಕ್ಷಿ. ಇದನರಿದು ಮತ್ತೆ ಜಂಗಮದ ಪಾದತೀರ್ಥಪ್ರಸಾದವ ಲಿಂಗಕ್ಕೆ ಕೊಟ್ಟು ಕೊಳಲಾಗದೆಂಬ ಪಂಚಮಹಾಪಾತಕರ ಮಾತ ಕೇಳಲಾಗದು. ಅದೆಂತೆಂದಡೆ:ವೀರಾಗಮದಲ್ಲಿ, ಜಂಗಮಾನಾಮಹಂ ಪ್ರಾಣೋ ಮಮ ಪ್ರಾಣೋ ಹಿ ಜಂಗಮಃ ಜಂಗಮೇನ ತ್ವಹಂ ಪೂಜ್ಯೋ ಮಯಾ ಪೂಜ್ಯೋ ಹಿ ಜಂಗಮಃ ಪರಸ್ಪರಮಭೇದತ್ವಾಜ್ಜಂಗಮಸ್ಯ ಮಮಾಪಿ ಚ ಪಾದೋದಕಪ್ರಸಾದಾಭ್ಯಾಂ ವಿನಾ ತೃಪ್ತಿರ್ನ ಜಾಯತೇ ಇಂತೆಂಬ ಶಿವನ ವಾಕ್ಯವನರಿದು, ಜಂಗಮದ ಪಾದತೀರ್ಥವ ಲಿಂಗಕ್ಕೆ ಮಜ್ಜನಕ್ಕೆರೆದು ಪ್ರಸಾದವ ಲಿಂಗಕ್ಕೆ ನೈವೇದ್ಯವ ಸಮರ್ಪಿಸಿ ಭೋಗಿಸುವಾತನೆ ಸದ್ಭಕ್ತ, ಆತನೆ ಮಾಹೇಶ್ವರ, ಆತನೆ ಪ್ರಸಾದಿ, ಆತನೆ ಪ್ರಾಣಲಿಂಗಿ, ಆತನೆ ಶರಣ, ಆತನೆ ಐಕ್ಯನು. ಇಂತಪ್ಪ ಷಟ್‍ಸ್ಥಲಬ್ರಹ್ಮಿಗೆ ನಮೋ ನಮೋ ಎಂಬೆ. ಇಂತಲ್ಲದೆ ಜಂಗಮದ ಪಾದತೀರ್ಥಪ್ರಸಾದರಹಿತನಾಗಿ ಆವನಾನೊಬ್ಬನು ತನ್ನ ಇಷ್ಟಲಿಂಗಕ್ಕೆ ಅರ್ಷವಿಧಾರ್ಚನೆ ಷೋಡಶೋಪಚಾರಕ್ರೀಯಿಂದ ಪೂಜೆಯ ಮಾಡುವಲ್ಲಿ ಅವನು ಶುದ್ಧಶೈವನು, ಅವನಿಗೆ ಮುಕ್ತಿಯಿಲ್ಲ ಕಾಣಾ ಕೂಡಲಚೆನ್ನಸಂಗಮದೇವಾ.
--------------
ಚನ್ನಬಸವಣ್ಣ
ಇನ್ನಷ್ಟು ... -->