ಮಣ್ಣ ತುಳಿದು ಮಡಿಕೆಯ ಮಾಡಿ
ಆವಿಗೆಯನೊಟ್ಟಿ ಸುಡುವಲ್ಲಿ,
ಅಗ್ನಿ ಸುಟ್ಟು ಮಡಿಕೆ ಉಳಿಯಿತ್ತು,
ಹರವಿಯ ಉಪಚಾರುಳ್ಳವಂಗೆಕೊಟ್ಟು.
ಉಪಚಾರಿಲ್ಲದವನ ಕೊಂದು,
ಗುಡುಮಿಯ ಉಪಚಾರ ಇಲ್ಲದವಂಗೆ ಕೊಟ್ಟು
ಉಪಚಾರುಳ್ಳವನ ಕೊಂದು,
ಕಿಡಿಕಿಯ ಕುಲಗೇಡಿಗೆ ಕೊಟ್ಟು, ಭವಗೇಡಿಯ ಕೊಂದು,
ಮೂರೆರಡು ಮಡಕಿಯ ಆರೂರವರಿಗೆ ಕೊಟ್ಟು
ಈರಾರು ಈರೆಂಟು ಕೊಂದು, ಉಳಿದ ಮಡಕಿಯ ಊರೆಲ್ಲ ಮಾರಲು,
ಊರು ಸುಟ್ಟು ಜನರೆಲ್ಲ ಸತ್ತು, ಸತ್ತವರ ಹೊತ್ತು
ಸತ್ತು ಕಾಯಕವ ಮಾಡುತ್ತಿರ್ಪರು ನೋಡೆಂದನಯ್ಯಾ
ಕಾಡನೊಳಗಾದ ಶಂಕರಪ್ರಿಯ ಚನ್ನಕದಂಬಲಿಂಗ
ನಿರ್ಮಾಯಪ್ರಭುವೆ.