ಅಥವಾ

ಒಟ್ಟು 600 ಕಡೆಗಳಲ್ಲಿ , 44 ವಚನಕಾರರು , 441 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಆವ ಜಾತಿಯಲ್ಲಿ ಹುಟ್ಟಿದವನಾದಡಾಗಲಿ, ಶ್ರೀಮಹಾದೇವನ ನೆನೆವಾತನದ್ಥಿಕ ನೋಡಾ. ಆತನಿಂದದ್ಥಿಕ ಕಂಗಳು ತುಂಬಿ ನೋಡುವಾತ. ಆತನಿಂದದ್ಥಿಕ ಕೈಮುಟ್ಟಿ ಪೂಜಿಸುವಾತ. ಅದೆಂತೆಂದಡೆ, ಶಿವಧರ್ಮೇ- ``ಲಿಂಗಸ್ಯ ದರ್ಶನಂ ಪುಣ್ಯಂ ದರ್ಶನಾತ್ ಸ್ಪರ್ಶನಂ ಶುಭಂ | ಶಿವಲಿಂಗಂ ಮಹಾಪುಣ್ಯಂ ಸರ್ವದೇವ ನಮಸ್ಕøತಂ | ಯಃ ಸ್ಪøಶೇದಪಿ ಪಾಣಿಭ್ಯಾಂ ನ ಸ ಪಾಪೈಃ ಪರಿಲಿಪ್ಯತೇ ||'' ಎಂದುದಾಗಿ, ಅಂತಪ್ಪ ಶಿವಲಿಂಗವನು ಹೆರೆಹಿಂಗದೆ ಅಂಗದ ಮೇಲೆ ನಿರಂತರ ಧರಿಸಿಕೊಂಡಿಪ್ಪಾತನೆ ಎಲ್ಲರಿಂದದ್ಥಿಕ ನೋಡಾ ಅಖಂಡೇಶ್ವರಾ.
--------------
ಷಣ್ಮುಖಸ್ವಾಮಿ
ಪಾದಪೂಜೆಯ ಮಾಡಿ, ಅಂಗುಷ್ಠವೆರಡು ಅಂಗುಲವೆಂಟು ಉಭಯಹಸ್ತದಲ್ಲಿ ಮಾಡಿಕೊಂಬುದೆ ಶಿಕ್ಷಾಪಾದೋದಕ. ಲಿಂಗಧಾರೀ ಮಹಾಯೋಗೀ ಚರಪಾದೋದಕಂ ವಿನಾ ದಿನೇನ ದಶಜನ್ಮಾನಿ ಮಾಸೇನ ಶತಜನ್ಮಸು ವರ್ಷೇ ಸಹಸ್ರಜನ್ಮಾನಿ ವರ್ಷಾರ್ಧೇ ಘೂಕವಾಯ¸õ್ಞ ದ್ವಿವರ್ಷೇ ¸õ್ಞಕರೇ ಗರ್ಭೇ ಜಾಯತೇ ನಾತ್ರ ಸಂಶಯಃ ಎಂದುದಾಗಿ ಆ ಶಿಕ್ಷಾಪಾದೋದಕವನೆ ಆ ವಿಭೂತಿಯಲ್ಲಿ ಸಮ್ಮಿಶ್ರವ ಮಾಡಿ ಲಲಾಟ ಮೊದಲಾದ ನಾಲ್ವತ್ತೆಂಟು ಸ್ಥಾನಂಗಳಲ್ಲಿ ಧಾರಣವ ಮಾಡುವುದು ಇದು ವೀರಶೈವರಿಗೆ ಸಲ್ಲುವ ನಡತೆ. ಶುದ್ಧಶೈವರಿಗೆ ಗಿಂಡಿಯಲ್ಲಿ ತುಂಬುವ ನಡತೆ. ವಿಶೇಷವೀರಶೈವರು ಗಿಂಡಿಯ ಮಾಡಲಾಗದು, ಅದೇನು ಕಾರಣವೆಂದಡೆ:ಅವರಿಗೆ ತ್ರಿವಿಧ ಪಾದೋದಕವು ನಿತ್ಯದ ಸಹಬಂಧವಾಗುವುದೆಂದು. [ಇದ]ನರಿದು ಆಚರಿಸುವಾತನೆ ನಿತ್ಯಮುಕ್ತನಯ್ಯಾ ಕೂಡಲಚೆನ್ನಸಂಗಮದೇವಾ.
--------------
ಚನ್ನಬಸವಣ್ಣ
ಗುರುಲಿಂಗಜಂಗಮಾರ್ಚನೆಯ ಕ್ರಮವ ದಯೆಯಿಂದ ಕರುಣಿಪುದು ಸ್ವಾಮಿ. ಕೇಳೈ ಮಗನೆ : ತಾನಿದ್ದ ಊರಲ್ಲಿ ಗುರುವು ಇದ್ದಡೆ ನಿತ್ಯ ತಪ್ಪದೆ ದರುಶನವ ಮಾಡುವುದು. ಗುರುಪೂಜೆಯ ಮಾಡುವಾಗ ಆ ಗುರುವಿನೊಳಗೆ ಲಿಂಗ-ಜಂಗಮವುಂಟೆಂದು ಭಾವಿಸಿ ತನು-ಮನ-ಧನವನೊಪ್ಪಿಸಿ ಅರ್ಚಿಸಿದ್ದುದೆ ಗುರುಪೂಜೆ. ಲಿಂಗಪೂಜೆಯ ಮಾಡುವಾಗ ಆ ಲಿಂಗದೊಳಗೆ ಜಂಗಮ-ಗುರುವುಂಟೆಂದುಭಾವಿಸಿ ತನು-ಮನ-ಧನವನೊಪ್ಪಿಸಿ ಅರ್ಚಿಸಿದ್ದುದೆ ಲಿಂಗಪೂಜೆ. ಇನ್ನು ಜಂಗಮದ ಪೂಜೆ ಮಾಡುವಾಗ ಆ ಜಂಗಮದೊಳಗೆ ಗುರು-ಲಿಂಗವುಂಟೆಂದು ಭಾವಿಸಿ ತನು-ಮನ-ಧನವನೊಪ್ಪಿಸಿ ಅರ್ಚಿಸಿದ್ದುದೆ ಜಂಗಮಪೂಜೆ. ಈ ತ್ರಿವಿಧಮೂರ್ತಿ ಭಕ್ತನ ತ್ರಿವಿಧ ತನುವಿಗೋಸ್ಕರವಾಗಿ ಇಷ್ಟ ಪ್ರಾಣ ಭಾವಲಿಂಗಸ್ವರೂಪವಾಗಿಹರೆಂದು ನಿರೂಪಿಸಿದಿರಿ ಸ್ವಾಮಿ. ಆ ತ್ರಿವಿಧಲಿಂಗದ ಪೂಜೆಯ [ಕ್ರಮವ] ಕರುಣಿಪುದು ಎನ್ನ ಶ್ರೀಗುರುವೇ. ಕೇಳೈ ಮಗನೆ : ಇಷ್ಟಲಿಂಗದ ಪೂಜೆಯ ಮಾಡುವಾಗ ಆ ಇಷ್ಟಲಿಂಗದೊಳಗೆ ಪ್ರಾಣಲಿಂಗ ಭಾವಲಿಂಗವುಂಟೆಂದು ಭಾವಿಸಿ ಕರ-ಮನ-ಭಾವದೊಳಗಿರಿಸಿ ಪೂಜಿಸುವುದು ಇಷ್ಟಲಿಂಗದಪೂಜೆ. ಪ್ರಾಣಲಿಂಗದ ಪೂಜೆಯ ಮಾಡುವಾಗ ಆ ಪ್ರಾಣಲಿಂಗದೊಳಗೆ ಇಷ್ಟಲಿಂಗ ಭಾವಲಿಂಗವುಂಟೆಂದು ಭಾವಿಸಿ ಭಾವ-ಮನ-ಕರದೊಳಗಿರಿಸಿ ಪೂಜಿಸುವುದು ಪ್ರಾಣಲಿಂಗದಪೂಜೆ. ಭಾವಲಿಂಗದ ಪೂಜೆಯ ಮಾಡುವಾಗ ಆ ಭಾವಲಿಂಗದೊಳಗೆ ಇಷ್ಟಲಿಂಗ ಪ್ರಾಣಲಿಂಗವುಂಟೆಂದು ಭಾವಿಸಿ ಕರ-ಮನ-ಭಾವದೊಳಗಿರಿಸಿ ಪೂಜಿಸುವುದು ಭಾವಲಿಂಗದಪೂಜೆ. ಸಾಕ್ಷಿ : 'ಏಕಮೂರ್ತಿಸ್ತ್ರಯೋ ಭಾಗಾಃ ಗುರುರ್ಲಿಂಗಂತು ಜಂಗಮಃ | ಜಂಗಮಶ್ಚ ಗುರುರ್ಲಿಂಗಂ ತ್ರಿವಿಧಂ ಲಿಂಗಮುಚ್ಯತೇ ||' ಎಂದುದಾಗಿ, ತ್ರಿವಿಧವು ಒಂದೇ ಎಂದರಿದಾತ ನಮ್ಮ ಶಾಂತಕೂಡಲಸಂಗಮದೇವ.
--------------
ಗಣದಾಸಿ ವೀರಣ್ಣ
ಗುರುಭಕ್ತರಾದವರು ತ್ರಿಕಾಲದಲ್ಲಿ ಹರಸ್ಮರಣೆಯಲ್ಲದೆ ಹರಿಯೆಂದು ನುಡಿಯಲಾಗದು. ಹರಿ ಶಬ್ದವ ಕೇಳಲಾಗದು, ಹರಿಯ ರೂಪವ ನೋಡಲಾಗದು. ಅದೇನು ಕಾರಣವೆಂದೊಡೆ : ಪೂರ್ಣಾಯುಷ್ಯವು, ವಿಮಲಮತಿಯು, ಸತ್ಕೀರ್ತಿಯು, ಮಹಾಬಲವು, ಕೆಟ್ಟು ಹೋಗುತ್ತಿಹುದು ನೋಡಾ ! ಅದೆಂತೆಂದೊಡೆ :ಬ್ರಹ್ಮಾಂಡಪುರಾಣೇ ``ನ ಪ್ರದೋಷೇ ಹರಿಂ ಪಶ್ಯೇತ್ ಯದಿ ಪಶ್ಯೇತ್ ಪ್ರಮಾದತಃ | ಚತ್ವಾರಿ ತಸ್ಯ ನಶ್ಯಂತಿ ಆಯುಃ ಪ್ರಜ್ಞಾ ಯಶೋ ಬಲಮ್ ||'' ಎಂದುದಾಗಿ, ಸತ್ತು ಹುಟ್ಟುವ ಹರಿಗೆ ಇನ್ನೆತ್ತಣ ದೇವತ್ವ ಹೇಳಾ ಅಖಂಡೇಶ್ವರಾ ?
--------------
ಷಣ್ಮುಖಸ್ವಾಮಿ
ಪಾದಪೂಜೆಯ ಮಾಡಿ ಪಾದತೀರ್ಥವ ಪಡೆದುಕೊಂಬ ಕ್ರಮವು ಎಂತೆಂದಡೆ : 'ದೇಶಿಕಸ್ಯ ಪದಾಂಗುಷ್ಠೇ ಲಿಖಿತಾ ಪ್ರಣವಂ ತತಃ | ಪಾದಪೂಜಾವಿಧಿಂ ಕೃತ್ವಾ ವಿಶೇಷಂ ಶೃಣು ಪಾರ್ವತಿ ||' ಎಂದುದಾಗಿ, ಭಯಭಕ್ತಿ ಕಿಂಕುರ್ವಾಣದಿಂದೆ ಜಂಗಮಕ್ಕೆ ಪಾದಾರ್ಚನೆಯಂ ಮಾಡಿ ಗದ್ದುಗೆಯನಿಕ್ಕಿ ಮೂರ್ತವ ಮಾಡಿಸಿ ತನ್ನ ಕರಕಮಲವಂ ಮುಗಿದು ಅಯ್ಯಾ, ಹಸಾದ ಮಹಾಪ್ರಸಾದ ಪೂರ್ವಜನ್ಮ ನಿವಾರಣಂ ದೀಕ್ಷಾಗುರು ಶಿಕ್ಷಾಗುರು ಮೋಕ್ಷಗುರು ಗುರುವಿನಗುರು ಪರಮಗುರು ಪರಮಾರಾಧ್ಯ ಶ್ರೀಪಾದಗಳಿಗೆ ಶರಣು ಶರಣಾರ್ಥಿಯೆಂದು 'ಪ್ರಣಮ್ಯ ದಂಡವದ್ಭೂಮೌ ಇಷ್ಟಮಂತ್ರಂ [ಸದಾಜಪೇತ್] ಶ್ರೀ ಗುರೋಃ ಪಾದಪದ್ಮಂ ಚ ಗಂಧಪುಷ್ಪಾsಕ್ಷತಾದಿಭಿಃ ||' ಎಂದುದಾಗಿ, ದೀರ್ಘದಂಡ ನಮಸ್ಕಾರವಂ ಮಾಡಿ ಪಾದಪೂಜೆಗೆ ಅಪ್ಪಣೆಯಂ ತಕ್ಕೊಂಡು ಮೂರ್ತವಂ ಮಾಡಿ ಲಿಂಗವ ನಿರೀಕ್ಷಿಸಿ ತನ್ನ ಅಂಗೈಯಲ್ಲಿ ಓಂಕಾರ ಪ್ರಣವಮಂ ವಿಭೂತಿಯಲ್ಲಿ ಬರೆದು ಆ ಜಂಗಮದ ಎರಡು ಪಾದಗಳ ತನ್ನ ಕರಕಮಲದಲ್ಲಿ ಲಿಂಗೋಪಾದಿಯಲ್ಲಿ ಪಿಡಿದುಕೊಂಡು ಎರಡು ಅಂಗುಷ್ಠಗಳಲ್ಲಿ ಪ್ರಣವಮಂ ಬರೆದು, ಅಷ್ಟವಿಧಾರ್ಚನೆ ಷೋಡಶೋಪಚಾರವ ಮಾಡಿ ನಮಸ್ಕರಿಸಿ, ಆ ಪೂಜೆಯಂ ಇಳುಹಿ ಬಟ್ಟಲೊಳಗೆ ಪ್ರಣವಮಂ ಬರೆದು ಬ್ರಹ್ಮರಂಧ್ರದಲ್ಲಿರ್ದ ಸತ್ಯೋದಕವೆಂದು ಭಾವಿಸಿ, ಆ ಉದಕದ ಬಲದಂಗುಷ್ಠದ ಮೇಲೆ ನೀಡುವಾಗ ಆಱುವೇಳೆ ಷಡಕ್ಷರವ ನುಡಿದು ಇಷ್ಟಲಿಂಗವೆಂದು ಭಾವಿಸಿ, ಎಡದಂಗುಷ್ಠದ ಮೇಲೆ ನೀಡುವಾಗ ಐದುವೇಳೆ ಪಂಚಾಕ್ಷರವ ನುಡಿದು ಪ್ರಾಣಲಿಂಗವೆಂದು ಭಾವಿಸಿ, ಎರಡಂಗುಷ್ಠದ ಮಧ್ಯದಲ್ಲಿ ಉದಕವ ನೀಡುವಾಗ ಒಂದು ವೇಳೆ 'ಓಂ ಬಸವಲಿಂಗಾಯನಮಃ' ಎಂದು ಸ್ಮರಿಸಿ, ಭಾವಲಿಂಗವೆಂದು ಭಾವಿಸಿ ದ್ರವನೆಲ್ಲವ ತೆಗೆದು ಮತ್ತೆ ಪೂಜೆಯ ಮಾಡಿ ನಮಸ್ಕರಿಸಿ ಶರಣಾರ್ಥಿಯೆಂದು ಆ ಜಂಗಮವು ಸಲ್ಲಿಸಿದ ಮೇಲೆ ತಾನು ಪಾದತೀರ್ಥವ ಸಲ್ಲಿಸುವುದು. ಪಂಚಾಂಗುಲಿ ಪಂಚಾಕ್ಷರಿಯಿಂದಲಿ ಲಿಂಗಕರ್ಪಿಸಿ ಆ ಪಂಚಾಂಗುಲಿಯುತ ಜಿಹ್ವೆಯಿಂದ ಸ್ವೀಕರಿಸುವುದು ಗುರುಪಾದೋದಕ. ಲಿಂಗವನೆತ್ತಿ ಅಂಗೈಯಲ್ಲಿರ್ದ ತೀರ್ಥವ ಸಲ್ಲಿಸಿದುದು ಲಿಂಗಪಾದೋದಕ. ಬಟ್ಟಲೊಳಗಿರ್ದ ತೀರ್ಥವ ಸಲಿಸಿದುದು ಜಂಗಮಪಾದೋದಕ. ಈ ತ್ರಿವಿಧ ಪಾದೋದಕ ಒಂದೇ ಎಂದರಿವುದು. ಹೀಗೆ ಕ್ರಮವರಿದು ಸಲಿಸುವರ್ಗೆ ಮುಕ್ತಿಯಾಗುವುದಕ್ಕೆ ತಡವಿಲ್ಲವೆಂದಾತ ನಮ್ಮ ಶಾಂತಕೂಡಲಸಂಗಮದೇವ.
--------------
ಗಣದಾಸಿ ವೀರಣ್ಣ
ತೂಬರದ ಕೊಳ್ಳಿಯಂತೆ ಉರಿವಾತ ಭಕ್ತನೆ ? ಹುಸಿದು ತಂದು ಮಾಡುವಾತ ಭಕ್ತನೆ ? ಭಕ್ತರ ಕುಲವನೆತ್ತಿ ನಿಂದಿಸುವಾತ ಭಕ್ತನೆ ? ನಿಂದಯಾ ಶಿವಭಕ್ತಾನಾಂ ಕೋಟಿ ಜನ್ಮನಿ ಸೂಕರಃ | ಸಪ್ತಜನ್ಮನಿ ಭವೇತ್ ಕುಷ್ಠೀ ದಾಸೀಗರ್ಭೇಷು ಜಾಯತೇ ||' ಎಂದುದಾಗಿ, ತನ್ನ ಪ್ರಾಣದ ಮೇಲೆ ಬಂದಡೂ ಬರಲಿ, ಇವರ ಬಿಡಬೇಕು. ಬಿಡದಿರಲು ಉರಿಲಿಂಗಪೆದ್ದಿಗಳರಸನೊಲ್ಲನವ್ವಾ.
--------------
ಉರಿಲಿಂಗಪೆದ್ದಿಗಳ ಪುಣ್ಯಸ್ತ್ರೀ ಕಾಳವ್ವೆ
ಲಿಂಗಪ್ರಸಾದವ ಜಂಗಮಕ್ಕೆ ಕೊಡುವ ಕರ್ಮಿಗಳು ನೀವು ಕೇಳಿರೆ. ಜಂಗಮಪ್ರಸಾದವ ಲಿಂಗಕ್ಕೆ ಕೊಡುವ ಧರ್ಮಿಗಳು ನೀವು ಕೇಳಿರೆ. ಲಿಂಗಪ್ರಸಾದವ ಜಂಗಮಕ್ಕೆ ಕೊಡುವುದು ಅನಾಚಾರ. ಜಂಗಮಪ್ರಸಾದವ ಲಿಂಗಕ್ಕೆ ಕೊಡುವುದು ಸದಾಚಾರ. ಅದೆಂತೆದಡೆ- ಶಿವಧರ್ಮ ಪುರಾಣದಲ್ಲಿ : ಲಿಂಗಾರ್ಪಿತ ಪ್ರಸಾದಂ ಚ ನದದ್ಯಾಜ್ಜಂಗಮಾರ್ಪಿತಂ | ಜಂಗಮಾರ್ಪಿತ ಪ್ರಸಾದಂ ತದದ್ಯಾಲಿಂಗಮೂರ್ತಿಷು || ಎಂದುದಾಗಿ, ಇದು ಕಾರಣ, ಜಂಗಮಪ್ರಸಾದವ ಲಿಂಗಕ್ಕೆ ಕೊಟ್ಟು ಕೊಂಬೆನಾಗಿ, ಎನ್ನ ಭವಂ ನಾಸ್ತಿಯಾಯಿತ್ತಯ್ಯಾ, ಬಸವಪ್ರಿಯ ಕೂಡಲಚೆನ್ನಬಸವಣ್ಣಾ.
--------------
ಹಡಪದ ಅಪ್ಪಣ್ಣ
ಅಂಧಕನು ಓಡ ಹಿಡಿದು ಸ್ವರೂಪವ ತಾ ನೋಡುವಂತೆ, ಶೈವ ಗುರುವಿನಲ್ಲಿ ಲಿಂಗ ಸಾಹಿತ್ಯವಾದ ಶಿಷ್ಯನ ವಿಧಿಯ ನೋಡಿರೆ ! ಗುರುವಿಂಗೆ ದೂರಾರ್ಚನೆ ಶಿಷ್ಯಂಗೆ ಇಷ್ಟಲಿಂಗಾರ್ಚನೆ, ಗುರು ವಾಯುಪ್ರಾಣಿ, ಶಿಷ್ಯ ಲಿಂಗಪ್ರಾಣಿ, ಗುರು ಭೂತದೇಹಿ, ಶಿಷ್ಯ ಲಿಂಗದೇಹಿ, ಗುರು ಅನರ್ಪಿತಭುಂಜಕ, ಶಿಷ್ಯ ಲಿಂಗಾರ್ಪಿತಭುಂಜಕ, ಗುರು ಅಗ್ನಿದಹನಸಂಪತ್ತು, ಶಿಷ್ಯ ಸಿದ್ಧಸಮಾಧಿಸಂಪತ್ತು, ಎಂತುಂಟು ಹೇಳಿರಣ್ಣಾ ? ``ಜ್ಞಾನಹೀನಗುgõ್ಞ ಪ್ರಾಪ್ತೇ ಶಿಷ್ಯಜ್ಞಾನಂ ನ ಸಿಧ್ಯತಿ ಮೂಲಚ್ಛಿನ್ನೇ ಯಥಾ ವೃಕ್ಷೇ ಕಥಂ ಪುಷ್ಪಂ ಫಲಂ ಭವೇತ್ ಎಂದುದಾಗಿ ಇವರಿಬ್ಬರ ಗುರುಶಿಷ್ಯಸಂಬಂಧಕ್ಕೆ ನರಕ ತಪ್ಪದು ಕಾಣಾ ಕೂಡಲಚೆನ್ನಸಂಗಮದೇವಾ.
--------------
ಚನ್ನಬಸವಣ್ಣ
ಅವಸರ, ಆರೋಗಣೆ, ಆಪ್ಯಾಯನ-ತ್ರಿವಿಧವೂ, ಲಿಂಗ ಮುಖದಲ್ಲಿ ಅರ್ಪಿತವಾಗೆ, ಆತನ ಪ್ರಸಾದಿಯೆಂಬೆನು. ಅವಸರ ಅನವಸರ ಆತ್ಮ(ಅಂಗ?)ದಿಚ್ಛೆ ಲಿಂಗಮುಖದಲ್ಲಿ ಅರ್ಪಿತವಿಲ್ಲಾಗಿ ಆತನನೆಂತು ಪ್ರಸಾದಿಯೆಂಬೆನು? ಅವಸರ ಅನವಸರವರಿದು ವೇಧಿಸಬಲ್ಲರೆ ಆತನ ಪ್ರಸಾದಿಯೆಂಬೆನು- ``ಲಿಂಗಸ್ಯಾವಸರೇ ಯಸ್ತು ಅಚ್ರ್ಯಂ ದದ್ಯಾತ್ ಸುಖಂ ಭವೇತ್ ಎಂದುದಾಗಿ, ಇದು ಕಾರಣ ಕೂಡಲಚೆನ್ನಸಂಗಯ್ಯಾ ನಿಮ್ಮ ಅವಸರವರಿದು ಅರ್ಪಿಸುವ ಅರ್ಪಣೆ ಸದ್ಭಾವಿಗಲ್ಲದಿಲ್ಲ.
--------------
ಚನ್ನಬಸವಣ್ಣ
ಪ್ರಣವವೆ ಸರ್ವವರ್ಣಂಗಳ ಕಾರ್ಯಕಾರಣವ್ಯಾಪ್ತಿ ಮೂಲವು, ಪ್ರಣವವೆ ಸರ್ವದೇವತಾಮಯವು, ಪ್ರಣವವೆ ಸರ್ವಮಂತ್ರಗಳೆಲ್ಲವಕ್ಕೂ ಪ್ರಾಣಕಳೆ. ಪ್ರಣವವೆ ಸರ್ವದೇವತಾಮಯ ಎಂದುದಾಗಿ ಸದ್ಗುರುವಿನುಪದೇಶದಿಂದವು ಪ್ರಣವಾದ್ಥಿಕವಪ್ಪ ಮಹಾಮಂತ್ರವ ಜಪಿಸುವ ಸದ್ಭಕ್ತನೆ ದೈವಜ್ಞನು, ಮಂತ್ರಜ್ಞನು. ಇಂತಪ್ಪ ಸದ್ಭಕ್ತದೇಹಿಕದೇವನಯ್ಯಾ ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರ.
--------------
ಉರಿಲಿಂಗಪೆದ್ದಿ
ಉಪ್ಪರಗುಡಿ ನಂದಿವಾಹನ ಸದ್ಯೋಜಾತನ ಬಾಗಿಲ ಮುಂದೆ ಸಾರುತ್ತೈದಾವೆ, ನೋಡಾ, ಶ್ರುತಿಗಳೂ ನಾಲ್ಕು ವೇದವೂ ಹುಸಿಯಿದೆ `ಭರ್ಗೋ ದೇವಸ್ಯ ದ್ಥೀಮಹಿ' ಎಂದುದಾಗಿ, ಕೂಡಲಸಂಗನಲ್ಲದಿಲ್ಲೆಂದುದು ವೇದ.
--------------
ಬಸವಣ್ಣ
ಸಂಸಾರ ಸಂಸಾರ, ಕಾಳಗತ್ತಲೆ ಕಾಳಗತ್ತಲೆ. ಕರ ಹಿರಿದು ಕರ ಹಿರಿದು, ಎಚ್ಚತ್ತಿರು ಎಚ್ಚತ್ತಿರು ಜ್ಞಾನಧನಕ್ಕೆ. ಎಚ್ಚತ್ತಿರು ಎಚ್ಚತ್ತಿರು ಇಂದ್ರಿಯಗಳ್ಳರಿಗೆ. ಕಾಮಃ ಕ್ರೋಧಶ್ಚ ಲೋಭಶ್ಚ ದೇಹೇ ತಿಷ್ಠಂತಿ ತಸ್ಕರಾಃ | ಜ್ಞಾನರತ್ನಾಪಹಾರಾಯ ತಸ್ಮಾತ್ ಜಾಗ್ರತ ಜಾಗ್ರತ. ಜನ್ಮ ದುಃಖಂ ಜರಾ ದುಃಖಂ ನಿತ್ಯಂ ದುಃಖಂ ಪುನಃ ಪುನಃ | ಸಂಸಾರಸಾಗರೋ ದುಃಖಂ ತಸ್ಮಾತ್ ಜಾಗ್ರತ ಜಾಗ್ರತ || ಎಂದುದಾಗಿ, ಸಲೆ ಜೀವಿತಗೊಂಡ ಸೊಡ್ಡಳ ಆಳು ಭಲಾ ಭಲಾ ಎನ್ನುತ್ತಿರಾ.
--------------
ಸೊಡ್ಡಳ ಬಾಚರಸ
ದ್ರವ್ಯರೂಪ ರೂಪಿಸುವೆ ಅರ್ಪಿತಕ್ಕೆಂದು ಅರ್ಪಿತರೂಪ ರೂಪಿಸುವೆ ಪ್ರಸಾದಕ್ಕೆಂದು, ಪ್ರಸಾದರೂಪ ರೂಪಿಸುವೆ ಕಾಯಕ್ಕೆಂದು, ಪ್ರಥಮೇ ಯೋಜಯೇದ್ದ್ರವ್ಯಂ ದ್ವಿತೀಯಂ ಅರ್ಪಿತಂ ತಥಾ ತದರ್ಥಂ ತು ಶರೀರಾರ್ಥಂ ಶರೀರಂ ಪ್ರಾಣಕಾರಣಂ ಎಂದುದಾಗಿ ಕಾಯರೂಪ ರೂಪಿಸುವೆ ಪ್ರಾಣಕ್ಕೆಂದು ಪ್ರಾಣರೂಪ ರೂಪಿಸುವೆ ಕೂಡಲಚೆನ್ನಸಂಗಯ್ಯಗೆಂದು.
--------------
ಚನ್ನಬಸವಣ್ಣ
ದಿಟದ ಚಂದ್ರನು ಅನೇಕ ಘಟದ ಜಲದೊಳಗೆ ಜನಿಸಿ ಅನೇಕ ವ್ಯವಹಾರವಾದಂತೆ ಜೀವನೆ ಜಗ, ಜಗವೆ ಜೀವನಾದ. ಆದಿ ಅನಾದಿ ವಿಚಿತ್ರತರವಾದ ಮಾಯೆ. ಈ ಮಾಯೆಯಿಂದ ತನಗೆ ತಾನೇ ಪ್ರತಿಬಿಂಬ. ಆ ಮಾಯಾ ಪ್ರತಿಬಿಂಬವೆ ತನಗೆ ಸಂಸಾರ. ಆ ಸಂಸಾರವನು ಆ ಪರಮಾತ್ಮನು ಕೂಡಿಯೂ ಕೂಡದೆ ಆ ಘಟ ಜಲ ಚಂದ್ರಮನ ಹಾಂಗೆ ವರ್ತಿಸುತ್ತಿಹನು. ಅದೆಂತೆಂದಡೆ: ``ಏಕ ಏವ ಹಿ ಭೂತಾತ್ಮಾಭೂತೇ ಭೂತೇ ವ್ಯವಸ್ಥಿತಃ| ಏಕಧಾ ಬಹುಧಾಚೈವ ದೃಶ್ಯತೇ ಜಲಚಂದ್ರವತ್||' ಎಂದುದಾಗಿ, ಸಟೆಯ ಮಾಯೆಯ ಸಟೆಯೆಂದು ಕಳೆದುಳಿದ ದ್ಥೀರ ನೀನೇ, ಸಿಮ್ಮಲಿಗೆಯ ಚೆನ್ನರಾಮಾ.
--------------
ಚಂದಿಮರಸ
ಪ್ರಸಾದ ಸೋಂಕಿದ ತನುವೆಲ್ಲ ಲಿಂಗಮಯ, ರೋಮರೋಮವೆಲ್ಲ ಲಿಂಗ. ಆ ಭಕ್ತಂಗೆ ಆಧಾರಸ್ಥಾನವೆ ನಿಜಸ್ಥಾನ. ಆಧಾರಚಕ್ರದಲ್ಲಿ ನಾಲ್ಕೆಸಳಿನ ತಾವರೆ ಕಮಲದ ಮಧ್ಯದಲ್ಲಿ ಬಾಲಾರ್ಕಕೋಟಿ ಸೂರ್ಯಪ್ರಕಾಶನುಳ್ಳುದು ಆಚಾರಲಿಂಗ. ಆ ಭಕ್ತನ ಗುಹ್ಯದಲ್ಲಿ ಗುರುಲಿಂಗ, ಆ ಭಕ್ತನ ಮಣಿಪೂರಕದಲ್ಲಿ ಶಿವಲಿಂಗ. ಆ ಭಕ್ತನ ಅನಾಹತದಲ್ಲಿ ಜಂಗಮಲಿಂಗವಿಹುದು. ಆ ಭಕ್ತನ ವಿಶುದ್ಧಿಚಕ್ರದಲ್ಲಿ ಪ್ರಸಾದಲಿಂಗವಿಹುದು. ಆ ಭಕ್ತನ ಭ್ರೂಮಧ್ಯದಲ್ಲಿ ಮಹಾಲಿಂಗವಿಹುದು. ಆ ಭಕ್ತನ ಆಧಾರದಲ್ಲಿ ನಕಾರ ಪ್ರಣಮದ ಜನನವು. ಆಣವಮಲ, ಮಾಯಾಮಲ, ಕಾರ್ಮಿಕಮಲ ಅನಂತಕೋಟಿಗಳಿಗೆ ನಕಾರವೇ ಮೂಲ. ಇನ್ನೂರು ಹದಿನಾರು ಭುವನಂಗಳು ಆ ಭಕ್ತನ ಗುದದಲ್ಲಿ ಬಿದ್ದಿದ್ದವಷ್ಟು ಹದಿನೆಂಟುಧಾನ್ಯಕ್ಕೆ ಶಾಕಪತ್ರ ಕಂದಮೂಲ ಫಲಾದಿಗಳಿಗೆ ಭೂಮಿ ಎಂದುದಾಗಿ. ಉಂಬುವದು ಅಗ್ನಿ, ಉಡುವದು ಪೃಥ್ವಿ ಎಂದುದಾಗಿ. ಈ ಜಗವೆಲ್ಲ ಮಲವನೆ ಭುಂಜಿಸಿ ಮಲವನೆ ವಿಸರ್ಜನೆಯಂ ಮಾಡುವರು. ಇದು ಕಾರಣ ಇದ ಕೊಂಬುವದು ಪ್ರಸಾದವಲ್ಲ. ಕೊಟ್ಟಾತ ಗುರುವಲ್ಲ, ಕೊಂಡಾತ ಸದ್ಭಕ್ತನಲ್ಲ. ಈ ಪ್ರಸಾದವ ಕೊಳ್ಳಬಲ್ಲರು ನಮ್ಮ ಶರಣರು. ಪ್ರಸಾದವೆಂತೆಂದಡೆ : ಅವರ್ಣ, ಆದಿ, ಅವ್ಯಕ್ತ. ಆ ನಾಮವು, ಭರ್ಗೋದೇವಾದಿ ಪಂಚಮೂರ್ತಿಗಳಿಗೆ ಆಶ್ರಯವಾಯಿತು. ಕರಣಚತುಷ್ಟಯಂಗಳಿಗೆ ನಿಲುಕದು. ಪ್ರಾಣಾದಿ ವಾಯುಗಳಿಗೆ, ಶ್ರೋತ್ರಾದಿ ಜ್ಞಾನೇಂದ್ರಿಯಂಗಳಿಗೆ ಅಗಮ್ಯ. ವಾಕ್ಕಾದಿ ಕರ್ಮೇಂದ್ರಿಯಗಳಿಗೆ ತೋರದು. ನಿಜಾನಂದ ನಿತ್ಯಪರಿಪೂರ್ಣ ಪ್ರಸಾದವು ಚೆನ್ನಯ್ಯಪ್ರಿಯ ನಿರ್ಮಾಯ ಪ್ರಭುವೆ, ನಿಮ್ಮ ಶರಣರಿಗಲ್ಲದೆ ಉಳಿದ ಜಡಜೀವಿಗಳಿಗೆ ಅಸಾಧ್ಯ.
--------------
ಚೆನ್ನಯ್ಯ
ಇನ್ನಷ್ಟು ... -->