ಅಥವಾ

ಒಟ್ಟು 27 ಕಡೆಗಳಲ್ಲಿ , 17 ವಚನಕಾರರು , 26 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಏರಿ ನೀರ ಕುಡಿಯಿತ್ತು. ಬೇರು ಬೀಜವ ನುಂಗಿತ್ತು. ಆರೈಕೆಯ ಮಾಡುವ ತಾಯಿ, ಧಾರುಣಿಯಲ್ಲಿ ಕೊರಳ ಕೊಯ್ದಳು. ಮಗು ಸತ್ತು, ಆ ಕೊರಳು ಬಿಡದು, ನಿಃಕಳಂಕ ಮಲ್ಲಿಕಾರ್ಜುನಾ.
--------------
ಮೋಳಿಗೆ ಮಾರಯ್ಯ
ಓಡ ಕುದುರೆಯ ಮೇಲೆ ಮಸಿಯ ಹಲ್ಲಣವ ಹಾಕಿ, ಬಸಲೆಯ ಹಂಬ ಬಾಯಿಗೆ ಕಟ್ಟಿ, ದೆಸೆವರಿವ ಅಸುರಾವುತ ಚೊಲ್ಲೆಹದ ಬಲ್ಲೆಹವ ಹಿಡಿದು, ಮುಗುಳುನಗೆಯವಳಲ್ಲಿ ಏರಿ ತಿವಿದ. ಚೊಲ್ಲೆಹದ ಬಲ್ಲೆಹ ಮುರಿದು, ಓಡಿನ ಕುದುರೆ ಒಡೆದು, ಮಸಿಯ ಹಲ್ಲಣ ನುಗ್ಗುನುಸಿಯಾಗಿ, ಬಸಲೆಯ ಬಾಯಕಟ್ಟು ಹರಿದು, ಅಸುರಾವುತ ಅವಳ ಕಿಸಲೆಯ ರಸಕ್ಕೊಳಗಾದ. ಅದೇತರಿಂದ ಹಾಗಾದನೆಂಬುದ ನೀನರಿ, ಪುಣ್ಯಾರಣ್ಯದಹನ ಬ್ಥೀಮೇಶ್ವರಲಿಂಗ ನಿರಂಗಸಂಗ.
--------------
ಕೋಲ ಶಾಂತಯ್ಯ
ಮೂರೂರ ಮಧ್ಯದಲ್ಲಿ ಆರು ವರ್ಣದ ಪದ್ಮ ಬೇರೆ ಬೇರವಕೆ ಅಕ್ಷರಗಳಾರು. ಏರಿ ಬಂದಪೆವೆಂಬ ಕರ್ಮಯೋಗಿಗಳೆಲ್ಲ ಗಾರಾಗಿ ಹೋದರು. ಮೀರಿದ ಶಿವಯೋಗ ಗಾರಾದವರಿಗೆ ಸೂರೆಯೆ, ಕಪಿಲಸಿದ್ಧಮಲ್ಲಿಕಾರ್ಜುನ?
--------------
ಸಿದ್ಧರಾಮೇಶ್ವರ
ಒಲೆ ಹತ್ತಿ ಉರಿದಡೆ ನಿಲಬಹುದಲ್ಲದೆ ಧರೆ ಹತ್ತಿ ಉರಿದಡೆ ನಿಲಲುಬಾರದು. ಏರಿ ನೀರುಂಬಡೆ, ಬೇಲಿ ಕೆಯ್ಯ ಮೇವಡೆ, ನಾರಿ ತನ್ನ ಮನೆಯಲ್ಲಿ ಕಳುವಡೆ, ತಾಯ ಮೊಲೆವಾಲು ನಂಜಾಗಿ ಕೊಲುವಡೆ, ಇನ್ನಾರಿಗೆ ದೂರುವೆ ಕೂಡಲಸಂಗಮದೇವಾ ! 26
--------------
ಬಸವಣ್ಣ
ಕಪ್ಪೆ ಸತ್ತು ಸರ್ಪನ ನುಂಗಿತ್ತು ನೋಡಾ. ಮೊಲ ಸತ್ತು ಬಲೆಯ ಮೀರಿತ್ತು ನೋಡಾ. ಮತ್ತೊಡೆದು ಜಲವ ನುಂಗಿತ್ತು ನೋಡಾ. ಜೀವ ಸತ್ತು ಕಾಯ ನುಂಗಿತ್ತು ನೋಡಾ. ಉದಕ ಒಡೆದು ಏರಿ ತುಂಬಿತ್ತು, ರೆಕ್ಕೆ ಮುರಿದು ಪಕ್ಷಿ ಹಾರಿತ್ತು. ಹಾರುವ ಪಕ್ಷಿಯ ಮೀರಿ ನಿಂದಿತ್ತು ಬಯಲು. ನುಂಗಿದ ಬಯಲವ, ಹಿಂಗಿದ ಪಕ್ಷಿಯ ಕಂಗಳು ನುಂಗಿತ್ತು, ನಿಃಕಳಂಕ ಮಲ್ಲಿಕಾರ್ಜುನಾ.
--------------
ಮೋಳಿಗೆ ಮಾರಯ್ಯ
ಬಾಳೆ ಬಲಿದು ಈಳೆಯ ಮರನಾಯಿತ್ತು. ಆ ಈಳೆಯ ಮರನ ಏರಿ ಈರೇಳು ಲೋಕವ ಕಂಡವನ ಕಂಗಳ ಮಧ್ಯದಲ್ಲಿ ನಿಂದವನ ಆರೆಂದರಿ, ಪುಣ್ಯಾರಣ್ಯದಹನ ಬ್ಥೀಮೇಶ್ವರಲಿಂಗ ನಿರಂಗಸಂಗ.
--------------
ಕೋಲ ಶಾಂತಯ್ಯ
ಒಂದು ಮುಳ್ಳ ಮೊನೆಯ ಮೇಲೆ ಎಂಬತ್ನಾಲ್ಕು ಲಕ್ಷ ಪಟ್ಟಣವ ಕಟ್ಟಿ, ಈ ಎಂಬತ್ನಾಲ್ಕು ಲಕ್ಷ ಪಟ್ಟಣಕ್ಕೆ ತಲೆಯಿಲ್ಲದ ತಳವಾರ, ಆ ತಲೆಯಿಲ್ಲದ ತಳವಾರನ ತಂಗಿ ಮಾತಿನಲಿ ಕಡುಜಾಣೆ. ಆಕೆ ಸರ್ಪನ ಸಿಂಬೆಯ ಮಾಡಿಕೊಂಡು ತಳವಿಲ್ಲದ ಕೊಡನ ತಕ್ಕೊಂಡು ಜಲವಿಲ್ಲದ ಬಾವಿಗೆ ನೀರಿಗೆ ಹೋದಳು. ಆ ಜಲವಿಲ್ಲದ ಬಾವಿಯೊಳೊಂದು ಬೇರಿಲ್ಲದ ಸಸಿ ಪುಟ್ಟಿತ್ತು. ಆ ಬೇರಿಲ್ಲದ ಸಸಿ ವೃಕ್ಷವಾಗಿರಲಾವೃಕ್ಷವ ಕಾಲಿಲ್ಲದ ಮೃಗ ಏರಿ ಹೋಗುತ್ತಿತ್ತು. ಅದ ಕಣ್ಣಿಲ್ಲದ ಕುರುಡ ಕಂಡ. ಕೈಯಿಲ್ಲದ ಪುರುಷ ಹೆದೆಯಿಲ್ಲದ ಬಿಲ್ಲ ಪಿಡಿದು, ಅಲಗಿಲ್ಲದಂಬಿನಲ್ಲೆಸೆಯಲಾ ಮೃಗವ ತಾಕಲಿಲ್ಲ. ಅದರ ಹೊಟ್ಟೆಯೊಳಗಿರ್ದ ಪಿಂಡಕ್ಕೆ ತಾಕಿತ್ತು. ಇದ ಕಂಡು ಬೆರಗಾದ ನಮ್ಮ ಗುಹೇಶ್ವರ.
--------------
ಅಲ್ಲಮಪ್ರಭುದೇವರು
ಕಾಳಮೇಘನೆಂಬ ಭೂಮಿಯಲ್ಲಿ ಕಾಳರಾತ್ರಿಯೆಂಬ ಏರಿ [ಕಟ್ಟೆ], ಮಂಜಿನ ನೀರು ತೊರೆಗಟ್ಟಿ ಹಾಯ್ದು ತುಂಬಿತ್ತು. ಆ ಕೆರೆಗೆ ತೂಬು ಬಿಸಿಲ ಸಂಭ್ರಮದ ಕಲ್ಲು, ಕಂಜನಾಳದ ನೂಲಿನ ಕಂಬ ಆ ತಲಪಿಂಗೆ. ಅಂದಿನ ಮುಚ್ಚುಳು, ಇಂದಿನ ದ್ವಾರದಲ್ಲಿ ಸೂಸುತ್ತಿರಲಾಗಿ ಸಾಳಿವನ ಬೆಳೆಯಿತ್ತು, ಕೊಯ್ದು ಅರಿಯ ಹಾಕಲಾಗಿ ಒಂದಕ್ಕೆ ಎರಡಾಗಿ ಎರಡಕ್ಕೆ ಮೂರುಗೂಡಿ ಹೊರೆಗಟ್ಟಿತ್ತು. ಹಾಕುವುದಕ್ಕೆ ಕಳನಿಲ್ಲದೆ, ನೆಡುವುದಕ್ಕೆ ಮೇಟಿಯಿಲ್ಲದೆ ಒಕ್ಕುವುದಕ್ಕೆ ಎತ್ತಿಲ್ಲದೆ, ಹೊರೆಯೆತ್ತ ಹೋಯಿತೆಂದರಿಯೆ ನಾ ಹೋದೆ, ಸದ್ಯೋಜಾತಲಿಂಗದಲ್ಲಿಗಾಗಿ.
--------------
ಅವಸರದ ರೇಕಣ್ಣ
ನವನಾಳಮಧ್ಯದಲ್ಲಿ ಅಷ್ಟದಳಪಟವ ಮೆಟ್ಟಿ ನಿಂದೆನಯ್ಯ. ಹತ್ತು ವಾಜಿಯಂಗಳ ಏರಿ ಷೋಡಶ ಬಾಗಿಲ ದಾಂಟಿ ನಾಡೊಳಗೆ ಏಕಲಿಂಗವ ಕಂಡು, ಭೇರಿ ಮೃದಂಗವ ನುಡಿಸಿ, ನಿರಾಲಂಬಲಿಂಗದೊಳು ಬೆರದಿದ್ದೆ ನೋಡಾ ಝೇಂಕಾರ ನಿಜಲಿಂಗಪ್ರಭುವೆ.
--------------
ಜಕ್ಕಣಯ್ಯ
ಸಕಲಮೂರ್ತಿಯಾಗಿ ಇಷ್ಟಲಿಂಗವಾಯಿತ್ತು. ನಿಷ್ಕಲಮೂರ್ತಿಯಾಗಿ ಪ್ರಾಣಲಿಂಗವಾಯಿತ್ತು. ಕೇವಲ ನಿರವಯಮೂರ್ತಿಯಾಗಿ ಭಾವಲಿಂಗವಾಯಿತ್ತು. ಸಕಲಮೂರ್ತಿಗೆ ಕ್ರಿಯೆ, ನಿಷ್ಕಲಮೂರ್ತಿಗೆ ಜ್ಞಾನ, ಕೇವಲ ನಿರವಯಮೂರ್ತಿಗೆ ಆನಂದ, ಸ್ಥೂಲವೇ ಕಾಯ, ಸೂಕ್ಷ್ಮವೇ ಪ್ರಾಣ, ಕಾರಣವೇ ವಸ್ತು. ಘ್ರಾಣ ಜಿಹ್ವೆ ನೇತ್ರ ತ್ವಕ್ಕು ಶ್ರೋತ್ರ ಹೃದಯವೆಂಬವು ಸೂಕ್ಷ್ಮದ ಷಡ್ವಿಧಲಿಂಗವು. ಇವಕ್ಕೆ `ಓಂ ನಮಃಶಿವಾಯ' ಎಂಬುದೇ ತೃಪ್ತಿ. ಸಂತೋಷವೇ ಕಾರಣ, ಮಹಾಕಾರಣವೇ ಪರಿಣಾಮ. ತೂರ್ಯಾತೀತವಾಗಿ ಸರ್ವಕೇಳಿಕೆಯಂ ಕೇಳಿ ನಿಜಾನಂದವಾಗಿಹುದು. ವಿರಾಟವೇ ಸುನಾದವಾಗಿ ಹೊರಬಿದ್ದು ನುಡಿದು ಭೇರಿನಾದದಂತೆ ಆಕಾಶಧ್ವನಿಯಂತೆ ತನಗೆ ತಾನೇ ಕೇಳುವುದು. ಹಿರಣ್ಯಗರ್ಭಬಿಂದುವಿನ ಮನೆಯಲ್ಲಿ ಗಾಳಿಪಟಕ್ಕೆ ಬೇರಬಿರಿಕೆಯ ಕಟ್ಟಿ ನುಡಿಸುವ ತೆರದಂತೆ ತೇಜವಾಗಿ ಶಂಖದ ಧ್ವನಿಯಂತೆ ತೋರುತಿರ್ಪ ಸುನಾದಕ್ಕೆ ಎರಡಂಗುಲದ ಮೇಲೆ ತೇಜವಿಹುದು. ಅದು ತುಂಬಿದ ಹುಣ್ಣಿಮೆಯ ಬೆಳದಿಂಗಳಂತೆ, ಚಂದ್ರಜ್ಯೋತಿಯ ಪ್ರಭೆಯಂತೆ, ಹೂಬಿಸಿಲಿನಂತೆ ತೋರುತಿರ್ಪುದು. ಕಳೆಯ ಮನೆಯಲ್ಲಿ ಎರಡಂಗುಲ ಪ್ರಮಾಣ. ಮೂಲಪ್ರಕೃತಿ ಮೂಗಿನಮೇಲೆ ಭ್ರೂಮಧ್ಯ ಪ್ರಣವದಲ್ಲಿ ಓಂಕಾರಧ್ವನಿಯ ಝೇಂಕಾರದಂತೆ, ಘಂಟೆಯ ಬಾರಿಸಿದಂತೆ, ತಟತಟನೆ ಹಾರಿ ಅದು ಭ್ರೂಮಧ್ಯಸ್ಥಾನದಲ್ಲಿ ತೋರುವುದು. ನಾದವೇ ಶಬ್ದ, ನಿಃಶಬ್ದವೇ ಬಿಂದುಮಯ. ನಾದದೊಳಗಿರ್ದ ನಾದವೇ ಓಂಕಾರ. ಚಿಜ್ಜ್ಯೋತಿಯ ಪ್ರಕಾಶ ಭ್ರೂಮಧ್ಯದ ಪಣೆಯ ಮೇಲೆ ಎರಡಂಗುಲದಲ್ಲಿ ಕಾಣಿಸುತ್ತಿಹುದು. ಅದು ಮನದಿಂದೆ ಕಂಡಿತೋ ಕಣ್ಣಿನಿಂದ ಕಂಡಿತೋ ಎಂದಡೆ, ನೆನಹು ಎಂಬ ಅಂತಃಕರಣ ಓಂ ನಮಃಶಿವಾಯ ಎಂಬ ಪ್ರಣವಜ್ಯೋತಿಯ ತೋರಿತ್ತು. ಚಿತ್ತದ ತೋರಿಕೆ ಅರವತ್ತಾರುಕೋಟಿ ಪ್ರಣವಜ್ಯೋತಿಯ ಕಿರಣದಲ್ಲಿ ತೇರಿನ ಬದಿಯ ಬಿರಿಸಿನೋಪಾದಿಯ ನೆನಹು ಮಾತ್ರಕ್ಕೆ ತೋರುತ್ತಿಹುದು. ಹೊರದೃಷ್ಟಿಯ ಒಳಗಿಟ್ಟು, ಒಳದೃಷ್ಟಿಯ ಹೊರಗಿಟ್ಟು ಪರಿಪೂರ್ಣವಾಗಲು, ಒಳಹೊರಗೆ ನೋಡುವ ಶಿವಶರಣರ ಮನ ಭಾವಕ್ಕೆ ಆನಂದವೇ ತೋರುತ್ತಿಹುದು. ದಿನಕರನ ಕಾಂತಿ, ಮಧ್ಯಾಹ್ನದ ಬಿಸಿಲು, ಅಂತರಂಗದ ಛಾಯೆಯಂತೆ, ನಿರ್ಮಲವಾದ ದರ್ಪಣದ ಪ್ರತಿಬಿಂಬದಂತೆ, ತನ್ನ ರೂಪಂಗಳ ತಾನೆ ನೋಡಿದಾತನು ಜೀವನ್ಮುಕ್ತನು. ಆತ ಭವದಬಳ್ಳಿಯ ಹರಿದು ನಿತ್ಯಾನಂದ ನಿರ್ಮಳ ನಿರಾವರಣ ನಿಜ ಚಿನ್ಮಯನಾಗಿಹನು. ಇನ್ನು `ಓಂ ನಮಃಶಿವಾಯ' ಎಂಬ ಊಧ್ರ್ವಪ್ರಣವ. ಅಳ್ಳನೆತ್ತಿಯ ಸ್ಥಾನದಲ್ಲಿ ಅರುಹಿನ ಮನೆಯುಂಟು. ಅದಕ್ಕೆ ತಟಿಮಂತ್ರ. ಅಂತರಂಗದ ಬಾಯಲ್ಲಿ ಎಡಬಲವು ಎರಡು ಕರ್ಣದ್ವಾರಂಗಳಲ್ಲಿ ನುಡಿಯ ಕೇಳಿದಡೆ ಸುನಾದವಾಯಿತ್ತು. ಅದು ದಶನಾದಂಗಳಿಂದೆ ಶರಧಿ ನಿರ್ಝರ ಮೇಘ ಮುರಜ ಭೇರಿ ಕಹಳೆ ಘಂಟೆ ಶಂಖ ವೀಣೆ ಭ್ರಮರನಾದಂಗಳೆಂಬ ದಶನಾದಂಗಳನು ಗುರುಮುಖದಿಂದರಿತು ಹಗಲಿರುಳು ಆ ದಶನಾದಂಗಳೊಳಗಾದ ಸುನಾದವನು ಎಡೆದೆರಹಿಲ್ಲದೆ ಲಾಲಿಸಿ ಕೇಳುವುದು ಶಿವಯೋಗೀಶ್ವರರು. ಅದು ಪ್ರಸಾದಲಿಂಗಸ್ಥಲ, ವಿಶುದ್ಧಿಯ ಮನೆ ; ಶರಣಸ್ಥಲ. ಆ ಸ್ಥಲದಲ್ಲಿ ನಾದವ ಕೇಳಿದವರಿಗೆ ಜಾಗ್ರ ಸ್ವಪ್ನ ಸುಷುಪ್ತಿಗಳೆಂಬ ಮೂರವಸ್ಥೆಗಳು, ತನುತ್ರಯಂಗಳು ತೂರ್ಯದಲ್ಲಿ ಹರಿದುಹೋಗುವವು. ಸುನಾದದಲ್ಲಿ ಮನಸ್ಸಿಟ್ಟಡೆ ಓಂ ನಮಃಶಿವಾಯ ಎಂಬ ಪ್ರಣವನಾದವ ಕೇಳಿದವರಿಗೆ ಸ್ವಪ್ನವು ಎಂದಿಗೂ ತೋರದು. ಇರುಹೆ ಸುಳಿದಡೆ ಎಚ್ಚರಿಕೆ, ದಿಗಿಲುಭುಗಿಲೆಂದಡೆ ನೀನಾರೆಲಾ ಎಂದು ಮಾತನಾಡಿಸಿಬಿಡುವನು. ಆ ಪ್ರಣವಘೋಷ ಸತ್ತೆನೆಂಬಂತೆ ದಿವಸ ಹನ್ನೆರಡು ತಾಸಿನೊಳಗೆ ತನುವ ಬಿಡುವ ಸಮಯದಲ್ಲಿ, ಆ ಘೋಷ ನಿರ್ಘೋಷವಾಗಿ ನಾದ ನುಡಿಯದು. ಅದು ಲಕ್ಷವಿಟ್ಟು ನೋಡಿದಡೆ ತೋರುವುದು. ಅಂಗುಲ ಪ್ರಮಾಣವಾಗಿ ವಸ್ತುವು ಅಂಗುಷ್ಟಕ್ಕೆ ಬರುವುದು. ವೃಕ್ಷವನೇರಿದ ಸರ್ಪನಂತೆ ಬ್ರಹ್ಮರಂಧ್ರದ ಕೊನೆಗೇರುವುದು. ಹೆದ್ದುಂಬಿಯ ಕೊಳವಿಯೋಪಾದಿಯಲ್ಲಿ ವಸ್ತುವು ಅಳ್ಳಿನೆತ್ತಿಯ ಸ್ಥಾನದಲ್ಲಿ ಏರಿ ಹೋಗುವುದು. ಈ ಮನೆಯ ಶಿವಶರಣ ಬಲ್ಲ. ಇದು ಹನ್ನೆರಡು ತಾಸು ಪುರಸತ್ತಿಗೆಯ ಹೇಳಿದ ಅರುಹು. ಇಂತಪ್ಪ ವಸ್ತುವಿನ ನಿಲುಕಡೆಯ ಬಲ್ಲ ಶರಣನು. ತನ್ನವಸಾನಕಾಲದ ಎಚ್ಚರಿಕೆಯನರಿದು, ಗೋವು ಮಲಗುವಷ್ಟು ಧರಣಿಯ ಸಾರಣಿಯ ಮಾಡುವುದು. ಗೋಮಯ ಗೋಮೂತ್ರ ಗೋಕ್ಷೀರ ಗೋದಧಿ ಗೋಘೃತ ಗೋರೋಚನ ಎಂಬ ಷಡುಸಮ್ಮಾರ್ಜನೆಯ ಮಾಡುವುದು. ಶಿವಜಂಗಮದ ಧೂಳಪಾದಾರ್ಚನೆಯ ಉದಕಮಂ ನೀಡಿ ಸಮ್ಮಾರ್ಜನೆಯ ಮಾಡುವುದು. ರಂಗವಲ್ಲಿಯ ತುಂಬುವುದು, ಭಸ್ಮವ ತಳೆವುದು. ಪಾದೋದಕ ಪ್ರಸಾದಮಂ ಸಲಿಸಿ, ಶಿವಗಣಂಗಳಿಗೆ ವಂದನೆಯ ಮಾಡಿ, ಆ ಸಮ್ಮಾರ್ಜನೆಯ ಮಾಡಿದ ಗದ್ಗುಗೆಯ ಮೇಲೆ ಮುಹೂರ್ತವ ಮಾಡಿ, `ಓಂ ನಮಃಶಿವಾಯ' ಎಂಬ ಪ್ರಣವಸ್ಮರಣೆಯ ಮಾಡುವುದು. ಹಸ್ತದಲ್ಲಿ ಇಷ್ಟಲಿಂಗವ ಹಿಡಿದುಕೊಂಡು ಇರವಂತಿಗೆ ಸೇವಂತಿಗೆ ಮೊಲ್ಲೆ ಮಲ್ಲಿಗೆ ಜಾಜಿ ಕರವೀರ ಸುರಹೊನ್ನೆ ಸಂಪಿಗೆ ಮರುಗ ಪಚ್ಚೆ ದವನ ಬಿಲ್ವಪತ್ರೆ ಮೊದಲಾದ ಸಮಸ್ತ ಪುಷ್ಪ ಪತ್ರೆಗಳ ಧರಿಸಿ, ಆ ಶಿವಲಿಂಗವನು ಮನವೊಲಿದು ಕಂಗಳ ತುಂಬಿ ನೋಡುತ್ತ, ದೇವಭಕ್ತರು ಬಂದಡೆ ಶರಣಾರ್ಥಿ ಎಂದು, ಮಜ್ಜನವ ನೀಡಿಸಿ, ವಿಭೂತಿಯ ಧರಿಸಿ, ಪುಷ್ಪಪತ್ರೆಗಳ ಧರಿಸಿ ಎಂದು ಅವರ ಪಾದವಿಡಿದು, ಶರಣಾರ್ಥಿ ಸ್ವಾಮಿಗಳಿಗೆ ಎಂದು ಹೇಳಿ, ಶಿವಾರ್ಪಣವ ಮಾಡಿ ಎಂದು ಬಿನ್ನಹವ ಮಾಡುವುದು. ಮದುವೆ ಮಾಂಗಲ್ಯ ಅರ್ತಿ ಉತ್ಸಾಹ ಶಿಶುವಿನ ಹೆಸರಿಡುವ ಹಾಗೆ ಹರುಷ ಪರುಷ ಧೈರ್ಯವೇ ಭೂಷಣವಾಗಿ ನಿರೋಧಂಗಳ ಮಾಡದೆ ``ಓಂ ನಮಃಶಿವಾಯ' ಎಂಬ ಮಂತ್ರ ಭೋರ್ಗರೆಯೆ ನಿರ್ಮಲ ನೈಷಿ*ಕದಿಂದೆ ಶಿವಜಂಗಮದ ಪಾದವನು ಮಸ್ತಕದ ಮೇಲೆ ಇಡಿಸುವುದು. ಹಿತವಂತರಾದವರು ವೀರಶೈವ ಪರಮವಚನಂಗಳಂ ಕೇಳಿಸುವುದು. ಎಡಬಲದಲ್ಲಿರ್ದ ಸಕಲ ಭಕ್ತರು ಮಹೇಶ್ವರರು `ಓಂ ನಮಃಶಿವಾಯ' ಎಂಬ ಶಿವಮಂತ್ರವನ್ನು ಆ ಶರಣನ ಕರ್ಣಂಗಳಲ್ಲಿ ಉಚ್ಚರಿಸುವುದು. ಈ ಹಡಗದ ಹಗ್ಗವ ಮತ್ತೊಂದು ಹಡಗಕ್ಕೆ ಹಾಕಿ ಬಿಗಿದಡೆ, ಹಡಗಕ್ಕೆ ಹಡಗ ಕೂಡಿ, ಸಮುದ್ರದ ತೆರೆಯೋಪಾದಿಯಲ್ಲಿ ಹಡಗವ ಬಿಟ್ಟು ಪ್ರತಿಹಡಗದೊಳಗೆ ಮೂರ್ತವ ಮಾಡಿದಂತೆ, ಮಂತ್ರಮಂತ್ರವು ಸಂಬಂಧವಾಗಿ, ಉರಿ ಕರ್ಪುರ ಕೊಂಡಂತಾಯಿತ್ತು ಶರಣನ ದೇಹಪ್ರಾಣವು. ಇದು ಗುಹ್ಯಕ್ಕೆ ಗುಹ್ಯ, ಗೋಪ್ಯಕ್ಕೆ ಗೋಪ್ಯ, ರಹಸ್ಯಕ್ಕೆ ಅತಿ ರಹಸ್ಯ ನೋಡಾ ಅಖಂಡೇಶ್ವರಾ.
--------------
ಷಣ್ಮುಖಸ್ವಾಮಿ
ಮದ್ದಿಗೆ ರುಜೆಯಡಸಿ, ನೀರಿಗೆ ಬಾಯಾರಿ, ಹಾವಿಗೆ ಹಲ್ಲಿಲ್ಲದೆ ವಿಷವಂಟಾಯಿತ್ತು. ಬೇವಿನ ಮರದಲ್ಲಿ ಮಾವಿನ ಹಣ್ಣಾಗಿ ಆ ಮರನ ಏರಿ ಮೆದ್ಧವರನರಿ. ಪುಣ್ಯಾರಣ್ಯದಹನ ಭೀಮೇಶ್ವರಲಿಂಗ ನಿರಂಗಸಂಗ.
--------------
ಕೋಲ ಶಾಂತಯ್ಯ
ಅಪ್ಪುವಿಲ್ಲದ ಏರಿ, ಚಿತ್ತವಿಲ್ಲದ ಘಟ, ನಿಜತತ್ವವನರಿಯದ ಪೂಜೆ, ವ್ಯರ್ಥವಾಯಿತ್ತು. ಅವನಿರವು, ಐಘಟದೂರ ರಾಮೇಶ್ವರಲಿಂಗವನರಿವುದೆ ?
--------------
ಮೆರೆಮಿಂಡಯ್ಯ
ಆಗಮ ನಿಗಮ ಶಾಸ್ತ್ರ ಪುರಾಣವೆಂಬ ಅಂಧಕನ ಕೈಗೆ ಕೋಲಕೊಟ್ಟು ನಡೆಸಿಕೊಂಡು ಹೋಗುವಾಗ, ತನ್ನ ಕಣ್ಣುಗೆಟ್ಟಡೆ ಮುಂದಕ್ಕೆ ಗಮನವಿಲ್ಲ. ಹಿಂದಕ್ಕೆ ತಿರುಗಲರಿಯದೆ, ಎರಡಕ್ಕೆ ಕೆಟ್ಟ ಜಂಬುಕನಂತೆ ಆಯಿತ್ತು ನೋಡಾ. ಸಜ್ಜನ ಗಂಡನ ಕದ್ದು, ಕಳ್ಳನ ಹಿಂದೆ ಹೋದ ಸತಿಯಂತೆ ಆದರಲ್ಲಾ. ಸಂತೆಯಲ್ಲಿ ಗುಡಿಸಲನಿಕ್ಕಿ ಹಡೆದುಂಬ ಸೂಳೆಯಂತೆ, ಮನವೆ ಸೂಳೆಯಾಗಿ, ಮಾತಿನ ಮಾಲೆಯ ಸರವನಿಕ್ಕಿಕೊಂಡು, ವಾಚಾಳಿಗತನದಿಂದ ಒಡಲ ಹೊರೆವವರೆಲ್ಲರೂ ಶರಣರಪ್ಪರೆ ? ಅಲ್ಲಲ್ಲ. ಅದೆಂತೆಂದಡೆ: ತನು ಕರಗಿ, ಮನ ಪುಳಕವಾದ ಮಹಾಮಹಿಮರಿಗಲ್ಲದೆ ಉಚ್ಚಿಯ ಬಚ್ಚಲಲ್ಲಿ ಓಲಾಡುವ ತೂತಜ್ಞಾನಿಗಳಿಗೆಂತಪ್ಪದು ಹೇಳಾ ? ಕಾಲಾಳು ಆಕಾಶವನಡರಿಹೆನೆಂಬ ಪರಿಯೆಂತೊ ? ಬ್ರಹ್ಮಪುರ ವೈಕುಂಠ ರುದ್ರಪುರ ಅಷ್ಟಾದಿ ಕೈಲಾಸವೆಂಬ ಈ ಪಂಚಗ್ರಾಮಂಗಳ ವರ್ಮ ಕರ್ಮವಳಿದ ಮಹಾದೇವಂಗಲ್ಲದೆ ಮುಂದಕ್ಕೆ ಅಡಿಯಿಡಬಾರದು. ಪಿಪೀಲಿಕ ಕಪಿಯ ಮತವೆಂಬ ಪಥ ಮೀರಿ, ವಿಹಂಗವೆಂಬ ವಾಹನಮಂ ಏರಿ, ಬ್ರಹ್ಮಾಂಡಕ್ಕೆ ದಾಳಿ ಮಾಡಿ, ಸುವರ್ಣಪುರಮಂ ಸುಟ್ಟು ಸೂರೆಗೊಂಡ ಮಹಾನುಭಾವಿಗಳ ತೋರಿ ಬದುಕಿಸಾ. ನಿಜಗುರು ಭೋಗೇಶ್ವರಾ, ನಾ ನಿಮ್ಮ ಧರ್ಮವ ಬೇಡಿಕೊಂಬೆ.
--------------
ಭೋಗಣ್ಣ
ಆನೆಯನೇರಿದಡೇನಯ್ಯಾ, ಮಾನವರಿಗೆ ಕೈಯಾನುವಾತ ? ಬೇಡುವು[ದ] ಬೇಡಲಾರ, ಏರಿ ಬರ್ಪ ಹೆಮ್ಮೆಯ ನೋಡಾ ! ಭವದ ಬಟ್ಟೆಯಲ್ಲಿ ಬ್ರಹ್ಮಚಾರಿಯ ಕಂಡು ಕೂಡಲಚೆನ್ನಸಂಗಯ್ಯ ನಗುತಿರ್ದ.
--------------
ಚನ್ನಬಸವಣ್ಣ
ಪೈರಿಗೆ ನೀರು ಬೇಕೆಂಬಲ್ಲಿ ಉಚಿತವನರಿದು ಬಿಡಬೇಕು. ಕ್ರೀಗೆ ಅರಿವು ಬೇಕೆಂಬಲ್ಲಿ ಉಭಯನರಿದು ಘಟಿಸಬೇಕು. ಏರಿ ಹಿಡಿವನ್ನಕ್ಕ ನೀರ ಹಿಡಿದಡೆ ಸುಖವಲ್ಲದೆ ಮೀರಿದರುಂಟೆ? ಕ್ರೀಯ ಬಿಡಲಿಲ್ಲ, ಅರಿವ ಮರೆಯಲಿಲ್ಲ. ಬೆಳೆಯ ಕೊಯಿದ ಮತ್ತೆ, ಹೊಲಕ್ಕೆ ಕಾವಲುಂಟೆ? ಫಲವ ಹೊತ್ತ ಪೈರಿನಂತೆ, ಪೈರನೊಳಕೊಂಡ ಫಲದಂತೆ, ಅರಿವು ಆಚರಣೆಯೆಲ್ಲ ನಿಂದು, ಆಚರಣೆ ಅರಿವಿನಲ್ಲಿ ಲೇಪನಾದ ಮತ್ತೆ ಕಾಮಭೀಮ ಜೀವಧನನೊಡೆಯನೆಂಬುದ ಭಾವಿಸಲಿಲ್ಲ.
--------------
ಒಕ್ಕಲಿಗ ಮುದ್ದಣ್ಣ
ಇನ್ನಷ್ಟು ... -->