ಶುಕ್ಲಶೋಣಿತಾತ್ಮಸಂಬಂಧವಾದ
ಮಾತಾ ಪಿತರುಗಳ ಕಾಮವಿಕಾರದಿಂದ ಪುಟ್ಟಿದ ಪಿಂಡಕ್ಕೆ,
ಅಂಗೈಯೊಳಗೆ ಇರುವ ಪರಿಯಂತರವಾಗಿ
ಜಡೆಯ ಕೂಸೆಂಬುವರು.
ಅಂಬೆಗಾಲಲಿ ನಡೆಯುವಾಗ ಹುಡುಗನೆಂಬುವರು.
ಎದ್ದು ಕಾಲಲಿ ನಡೆಯುವಾಗ ಪೋರನೆಂಬುವರು
ಒಳ ಹೊರಗೆ ಓಡಾಡುವಾಗ ಹೆಸರುಗೊಂಡು
ಬಾರಲೇ ಹೋಗಲೆಯೆಂಬುವರು.
ಷೋಡಶವರುಷಕ್ಕೆ ತಮ್ಮಾ ಅಪ್ಪಾ ಎಂದು ಕರೆವರು.
ಪಂಚವಿಂಶತಿವರುಷಕ್ಕೆ ಅಣ್ಣಾ ಅಪ್ಪಾ ಎಂದು ಕರೆವರು.
ಮೂವತ್ತುವರುಷದಿಂ ಐವತ್ತುವರುಷತನಕ ಅಪ್ಪನವರು ಎಂದು ಕರೆವರು,
ನೆರೆಯೊಡೆದ ಮೇಲೆ ಹಿರಿಯರೆಂಬುವರು.
ಹಲ್ಲುಬಿದ್ದ ಮೇಲೆ ಮುದುಕನೆಂಬುವರು.
ಬೆನ್ನುಬಾಗಿ ಕಣ್ಣು ಒಳನಟ್ಟು ಗೂಡುಗಟ್ಟಿ ಗೂರಿಗೂರಿ
ಮುಕುಳಿ ನೆಲಕ್ಕೆಹತ್ತಲು ಮುದೋಡ್ಯಾ ಎಂಬುವರು.
ಇಂತೀ ನಾಮಂಗಳು ಆತ್ಮಂಗೆ ದೇಹಸಂಗದಿಂದ ಪುಟ್ಟಿದವಲ್ಲದೆ
ಆ ದೇಹದೊಳಗಿರುವ ಆತ್ಮನು
ಕೂಸಲ್ಲ, ಪೋರನಲ್ಲ, ಹಿರಿಯನಲ್ಲ, ಮುದುಕನಲ್ಲ.
ಈ ಭೇದವ ನಿಮ್ಮ ಶರಣರು ಬಲ್ಲರಲ್ಲದೆ
ಈ ಲೋಕದ ಗಾದಿಮನುಜರೆತ್ತ ಬಲ್ಲರಯ್ಯಾ
ಕಾಡನೊಳಗಾದ ಶಂಕರಪ್ರಿಯ ಚನ್ನಕದಂಬಲಿಂಗ
ನಿರ್ಮಾಯಪ್ರಭುವೆ.