ಮರ್ತ್ಯಲೋಕದ ಮಹಾಮನೆ ಹಾಳಾಗಿ ಹೋಗಬಾರದೆಂದು
ಕರ್ತನಟ್ಟಿದನಯ್ಯಾ ಒಬ್ಬ ಶರಣನ !
ಆ ಶರಣ ಬಂದು ಕಲ್ಯಾಣವೆಂಬ ಶಿವಪುರವ ಕೈಲಾಸವ ಮಾಡಿ
ರುದ್ರಗಣ ಪ್ರಮಥಗಣಂಗಳೆಲ್ಲರ ಹಿಡಿತಂದು
ಅಮರಗಣಂಗಳೆಂದು ಹೆಸರಿಟ್ಟು ಕರೆದು,
ಅಗಣಿತಗಣಂಗಳೆಲ್ಲರ ಹಿಡಿತಂದು,
ಅಸಂಖ್ಯಾತರೆಂಬ ಹೆಸರಿಟ್ಟು ಕರೆದು,
ಭಕ್ತಿಯ ಕುಳಸ್ಥಲವ ಶ್ರುತದೃಷ್ಟಪವಾಡದಿಂದ ಮರೆದು ತೋರಿ,
ಜಗವರಿಯಲು ಶಿವಾಚಾರವ ಧ್ವಜವನೆತ್ತಿಸಿ
ಮರ್ತ್ಯಲೋಕ ಶಿವಲೋಕವೆರಡಕ್ಕೆ ನಿಚ್ಚಿಣಿಗೆಯಾದನು.
ಆ ಶಿವಶರಣನ ಮನೆಯೊಳಗಿಪ್ಪ ಶಿವಗಣಂಗಳ ತಿಂಥಿಣಿಯ ಕಂಡು,
ಎನ್ನಮನ ಉಬ್ಬಿಕೊಬ್ಬಿ ಓಲಾಡುತ್ತಿದ್ದೆನಯ್ಯಾ !
ನಮ್ಮ ಗುಹೇಶ್ವರನ ಶರಣ ಸಂಗನಬಸವಣ್ಣನ
ದಾಸೋಹದ ಘನವನೇನೆಂದೆನಬಹುದು ನೋಡಾ ಸಿದ್ಧರಾಮಯ್ಯಾ.