ಒಂದು ಊರಿಗೆ ಒಂಬತ್ತು ಬಾಗಿಲು.
ಆ ಊರಿಗೆ ಐವರು ಕಾವಲು, ಆರುಮಂದಿ ಪ್ರಧಾನಿಗಳು,
ಇಪ್ಪತ್ತೈದು ಮಂದಿ ಪರಿವಾರ.
ಅವರೊಳಗೆ ತೊಟ್ಟನೆ ತೊಳಲಿ ಬಳಲಲಾರದೆ
ಎಚ್ಚತ್ತು ನಿಶ್ಚಿಂತನಾದ ಅರಸನ ಕಂಡೆ.
ಆ ಅರಸಿನ ಗೊತ್ತುವಿಡಿದು,
ಒಂಬತ್ತು ಬಾಗಿಲಿಗೆ ಲಿಂಗಸ್ಥಾಪ್ಯವ ಮಾಡಿ, ಒಂದು ಬಾಗಿಲಲ್ಲಿ ನಿಂದು,
ಕಾವಲವನೆ ಕಟ್ಟಿಸಿ, ಪ್ರಧಾನಿಗಳನೆ ಮೆಟ್ಟಿಸಿ,
ಪರಿವಾರವನೆ ಸುಟ್ಟು, ಅರಸನ ಮುಟ್ಟಿಹಿಡಿದು ಓಲೈಸಲು
ಸಪ್ತಧಾತು ಷಡುವರ್ಗವನೆ ಕಂಡು, ಕತ್ತಲೆಯ ಕದಳಿಯ ದಾಂಟಿ,
ನಿಶ್ಚಿಂತದಲ್ಲಿ ಬಚ್ಚಬರಿಯ ಬೆಳಗಿನೊಳಗೋಲಾಡಿ
ಸುಖಿಯಾದೆನಯ್ಯಾ ಅಪ್ಪಣ್ಣಪ್ರಿಯ ಚೆನ್ನಬಸವಣ್ಣಾ.