ಅಥವಾ

ಒಟ್ಟು 20 ಕಡೆಗಳಲ್ಲಿ , 12 ವಚನಕಾರರು , 18 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಸಚ್ಚಿದಾನಂದ ಬ್ರಹ್ಮೋಪದೇಶ ಭಕ್ತಮಹೇಶ್ವರರು ಪರಮಪಾತಕಸೂತಕಂಗಳ ಬಾಹ್ಯಾಂತರಂಗದಲ್ಲಿ ಹೊದ್ದದೆ, ಸತ್ಯಶರಣರು ಮಾಡುಂಡುದೊಂದು ಕಾಯಕ, ಬೇಡುಂಡುದೊಂದು ಕಾಯಕದಿಂದ ಗಳಿಸಿದಂಥ ಪದಾರ್ಥಗಳ, ಗುರುಚರಪರಸ್ಥಿರಕ್ಕೆ ಷಟ್‍ಸ್ಥಲಸಂಬಂಧಗಳಿಂದ, ಷಡ್ವಿಧಮಂತ್ರಗಳ ಸೊಮ್ಮಿನಿಂ ಸಂತೃಪ್ತರಾಗಿರ್ಪುದು. ಆ ನಿಲುಕಡೆಯೆಂತೆಂದಡೆ : ಶ್ರುತಿಗುರುಸ್ವಾನುಭವ ಸಾಕ್ಷಿಯಾಗಿ, ಶ್ರೀಗುರುಲಿಂಗಜಂಗಮವೆ ಪರಾತ್ಪರವೆಂದು ಕಂಡು, ಷಡುಸ್ಥಲಮಾರ್ಗವಿಡಿದು, ತನ್ನ ನಿಜವ ತಾನರಿಯದೆ, ಭವಿಶೈವ ಬ್ಥಿನ್ನ ಕರ್ಮಿಗಳಂತೆ ಭಾವಭ್ರಮೆಗೆಟ್ಟು, ಹೊಲಬುದಪ್ಪಿ, ಭೋಗಾಪೇಕ್ಷಿತರಾಗಿ, ಹಲವು ಶಾಸ್ತ್ರೋಪದೇಶವಿಡಿದು, ಕಾಶಿ ರಾಮೇಶ್ವರ ಕಂಚಿ ಕಾಳಹಸ್ತಿ ಪಂಪಾಕ್ಷೇತ್ರ ಗೋಕರ್ಣ ಶ್ರೀಶೈಲಾದಿಯಾದ ತೀರ್ಥಯಾತ್ರೆ, ವೀರಣ್ಣ ಬಸವಣ್ಣ ಮಲ್ಲಣ್ಣ ಹಾವಿಗೆ ದಂಡಾಗ್ರ ಗಿಳಿಲು ಶಂಖ ಭಸ್ಮಗುಂಟಿಕೆ ತೀರ್ಥದಗುಂಬ ಹಾದಿಬೆನವ ಹಳ್ಳದ ಬೆನವ ವಾಸರದಯ್ಯ ವಿನಾಯಕ ಶಕ್ತಿ ಗಣೇಶ ಚಂಡಿ ಚಾಮುಂಡಿಯಲ್ಲಿ ಏಕನಾತಿ ಹಿರಿಹೊಳೆ ಜಟ್ಟಿಂಗ ತೆಪ್ಪದಾರತಿ ಪಂಚಪಾಂಡವರು ಬನ್ನಿಮಹಾಂಕಾಳಿ ತುಳಸಿ ಬಿಲ್ವವೃಕ್ಷ ಸಮಾದ್ಥಿ ಗದ್ದುಗೆ ಪುರಾಣ ವಚನಾರ್ಥಪುಸ್ತಕ ಲೆಕ್ಕದ ಓಹಿ ಕತ್ತಿ ಕಂಡೇಪೂಜೆ, ಊರಬೀರ ಪೀರ ಗೋರಿ ಸತ್ತವರ ತಿಥಿ ಚಿತ್ತಹೊಲೆ ಕರ್ಮದ ಗಂಗೆ ಗುಗ್ಗುಳ ಗೌರೀನೋಂಪಿ ದೀಪಹರಕೆ ಪೂಜೆ ಕರಿಯಸೀರೆ ಊರ ಮಾರಿದೇವತೆ ಅಂಬಲಿ ಮಜ್ಜಿಗೆ ಕುಂಭ ಹೊಸ್ತಲ ಮದುವೆಯಕಂಭ ಕುಂಭ ಸರಕಿನಗಂಟು ಮಹತ್ವ ಮೆರೆದವರ ಪಾದಮುದ್ರೆ ಕಡೆಯಾದವಕ್ಕೆ, ತನ್ನ ಕಾಯ ವಾಚ ಮನದಲ್ಲಿ ಹೊಳೆದು, ಪಿತ-ಮಾತೆ ಸತಿ-ಸುತ ಒಡಹುಟ್ಟಿದವರು ಸೇವಕ ಕಡೆಯಾದವರಿಂದೆ ತನ್ನ ಮನೆಯಲ್ಲಿ ಮಾಡಿದ ಎಡೆ ವಾರಮೃತ್ಯೋದಕ, ಪಾದೋದಕಸಂಬಂಧವಾದ, ವಿಭೂತಿ-ಗಂಧಾಕ್ಷತೆ-ಪುಷ್ಪ-ಪತ್ರಿ ಧೂಪ-ದೀಪ ಹಣ್ಣು-ಕಾಯಿ ವಸ್ತ್ರಾಭರಣ-ಪಂಚಕಳಸ ಕಾಣಿಕೆ ಮೊದಲಾದ ಬ್ಥಿನ್ನವ ಕರ್ಮಕ್ರಿಯಾಚಾರಲಿಂಗಬಾಹ್ಯರಾದ ಬ್ರಹ್ಮ ಕ್ಷತ್ರಿಯ ವೈಶ್ಯ ಶೂದ್ರ ಪಾಶುಪತ ಕಾಳಾಮುಖಿ ಯೋಗಿ-ಜೋಗಿ ಶ್ರವಣ-ಸನ್ಯಾಸಿ ಯತಿ-ವ್ರತಿ ಮನು-ಮುನಿ ಗರುಡ-ಗಂಧರ್ವ ಯಕ್ಷ-ರಾಕ್ಷಸ ಸಿದ್ಧ-ಸಾಧ್ಯರುಪದೇಶವಿಡಿದು ಚರಲಿಂಗೋದಯಘನಪಾದತೀರ್ಥವರ್ಪಿಸಿ, ನೈವೇದ್ಯ ಮಾಡಿಸುವಂಥಾದ್ದೆ ಅನಾಚಾರ. ಇದೇ ಭವಿಮಾಟಕೂಟ ಅಸತ್ಯದ ನಡೆನುಡಿಯ ವಿಚಾರದ ಪ್ರಥಮಪಾತಕ. ಇದಕ್ಕೆ ಹರನಿರೂಪ ಸಾಕ್ಷಿ : ``ಶಿವಾಚಾರಸುಸಂಪನ್ನಃ ಕೃತ್ವ್ದಾನ್ಯದೈವಸ್ಯ ಪೂಜನಂ | ಶ್ವಾನಯೋನಿಶತಂ ಗತ್ವಾ ಚಾಂಡಾಲಗೃಹಮಾಚರೇತ್ || ಅನಾಚಾರಿಕೃತಂ ಪಾಕಂ ಲಿಂಗನೈವೇದ್ಯಕಿಲ್ಬಿಷಂ | ಲಿಂಗಾಚಾರಿಕೃತಂ ಪಾಕಂ ಲಿಂಗನೈವೇದ್ಯಮುತ್ತಮಂ || ತದ್ದಿನಂ ದಿನದೋಷೇಣ ಶೋಣಿತಂ ಸುರಾಮಾಂಸಯೋಃ | ಏಕಭುಕ್ತೋಪವಾಸೇನ ನರಕೇ ಕಾಲಮಕ್ಷಯಂ || ಸೌಮೇ ಭೌಮೇ ವ್ಯತಿಪಾತೇ ಸಂಕ್ರಾಂತಿಶಿವರಾತ್ರಿಯೋ | ಶೈವಕರ್ಮೋಪವಾಸಿನಾಂ ನರಕೇ ಕಾಲಮಕ್ಷಯಂ || ಕಾರ್ತೀಕಮಾಘಶ್ರಾವಣ ಶೈವಪೂಜಾವಿಶೇಷತಃ | ವೀರಶೈವಸ್ತಥಾ ಕೃತ್ವಾ ಸನ್ತಶ್ಟ ಪ್ರಾಕೃತೈಃ ಸಮಾಃ || ಸ್ಥಾವರಾರ್ಪಿತನೈವೇದ್ಯಾತ್ ನ ತೃಪ್ತಿರ್ಮಮ ಪಾರ್ವತಿ | ಜಂಗಮಾರ್ಪಿತನೈವೇದ್ಯಾತ್ ಮಮ ತೃಪ್ತಿಶ್ಚ ಸರ್ವದಾ || ಸತ್ಪಾತ್ರದತ್ತವಿತ್ತಸ್ಯ ತದ್ಧನಂ ಸ್ವಧನಂ ಸುಖಂ | ಅಪಾತ್ರದತ್ತ ವಿತ್ತಸ್ಯ ತದ್ಧನಂ ಸ್ವಸುಖಂ ಭವೇತ್ || ಚರಸ್ಯ ಗಮನೋ ನಾಸ್ತಿ ಭಕ್ತಸ್ಯ ಗೃಹಮಾಚರೇತ್ | ಅನ್ಯಗೃಹಂ ಗಮಿಷ್ಯಂತಿ ಸದ್ಯೋ ಗೋಮಾಂಸಭಕ್ಷಣಮ್ || ಇಷ್ಟಲಿಂಗಮವಿಶ್ವಸ್ಯ ಅನ್ಯದೈವಮುಪಾಸತೇ | ಶ್ವಾನಯೋನಿ ಶತಂ ಗತ್ವಾ ಚಾಂಡಾಲಗೃಹಮಾಚರೇತ್ || ಬಹುಲಿಂಗಪೂಜಕಸ್ಯ ಬಹುಭಾವಗುರುಸ್ತಥಾ | ಬಹುಪ್ರಸಾದಂ ಭುಂಜಂತಿ ವೇಶ್ಯಾಪುತ್ರಸ್ತಥೈವ ಚ || ಅಭಕ್ತಜನಸಂಗಶ್ಚ ಮಂತ್ರಸ್ಯ ಚ ಆಗಮಃ | ಅನ್ಯದೈವಪರಿತ್ಯಾಗಃ ಲಿಂಗಭಕ್ತಸ್ಯ ಲಕ್ಷಣಂ || ಲಿಂಗಧಾರಕಭಕ್ತಾನಾಂ ಲಿಂಗಬಾಹ್ಯಸತೀಸುತಾಃ | ಆಲಿಂಗಿತಾ ಚುಂಬಿತಾಶ್ಚ ರೌರವಂ ನರಕಂ ವ್ರಜೇತ್ ||'' ಇಂತೆಂಬ ಹರಗುರುವಾಕ್ಯಪ್ರಮಾಣವದಾಗಿ, ಸದ್ಭಕ್ತಶರಣಗಣಾರಾಧ್ಯರು ಭೂಪ್ರತಿಷ್ಠಾದಿಗಳ ಹೊದ್ದಿದಡೆ, ಭವಬಂಧನವಪ್ಪದು ತಪ್ಪದು. ಅದು ಕಾರಣವಾಗಿ ಗುರುಮಾರ್ಗಿಕರು ಹೊದ್ದದೆ, ಭವಸಾಗರವ ದಾಂಟಿ, ನಿರ್ಧರದಿಂದಿಪ್ಪುದೊಂದು ನರಗುರಿಗಳ ಪ್ರಥಮಪಾತಕನಿರಸನ ಕಾಣಾ ನಿರವಯಪ್ರಭು ಮಹಾಂತ ಸಿದ್ಧಮಲ್ಲಿಕಾರ್ಜುನಲಿಂಗೇಶ್ವರ.
--------------
ಮೂರುಸಾವಿರ ಮುಕ್ತಿಮುನಿ
ನಿರಂಜನ ಪ್ರಣವದ ನೆನಹುಮಾತ್ರದಿಂದ ಅವಾಚ್ಯ ಪ್ರಣವದುತ್ಪತ್ಯವಾಯಿತ್ತು. ಇನ್ನು ಅವಾಚ್ಯ ಪ್ರಣವದ ನಿರ್ದೇಶಸ್ಥಲದ ವಚನವೆಂತೆಂದಡೆ : ``ಸತ್ಯಂ ಜ್ಞಾನಮನಂತಂ ಬ್ರಹ್ಮ ಏಕಮೇವ ನ ದ್ವಿತೀಯಂ ಬ್ರಹ್ಮಂ'' ಎಂಬ ಪರಬ್ರಹ್ಮವಿಲ್ಲದಂದು, ``ಏಕಏವೋ ರುದ್ರೋ ಮಹೇಶ್ವರಃ'' ಎಂಬ ಮಹೇಶ್ವರತತ್ವವಿಲ್ಲದಂದು, ವಿಶ್ವರೂಪರುದ್ರ ವಿಶ್ವಾದ್ಥಿಕಮಹಾರುದ್ರರಿಲ್ಲದಂದು, ಕೋಟಿ ಶತಕೋಟಿ ಸಾವಿರ ಜಡೆಮುಡಿ ಗಂಗೆ ಗೌರಿಯರಿಲ್ಲದಂದು, ಕೋಟಾನುಕೋಟಿ ಕಾಲರುದ್ರರಿಲ್ಲದಂದು, ಅಸಂಖ್ಯಾತ ಪ್ರಳಯ ಕಾಲರುದ್ರರಿಲ್ಲದಂದು, ಅವಾಚ್ಯಪ್ರಣವವಾಗಿದ್ದನಯ್ಯ ಇಲ್ಲದಂತೆ ನಮ್ಮ ಅಪ್ರಮಾಣಕೂಡಲಸಂಗಮದೇವ.
--------------
ಬಾಲಸಂಗಯ್ಯ ಅಪ್ರಮಾಣ ದೇವ
`ಏಕೋ ರುದ್ರಮಹೇಶ್ವರಾ' ಎಂಬ ಮಹೇಶ್ವರತತ್ವ ತಾನಿರ್ದಲ್ಲಿ, ವಿಶ್ವರೂಪರುದ್ರ ವಿಶ್ವಾದ್ಥಿಕಮಹಾರುದ್ರರು ತಾನಿರ್ದಲ್ಲಿ, ಕೋಟಿ ಶತಕೋಟಿ ಸಾವಿರಜಡೆಮುಡಿ ಗಂಗೆ ಗೌರಿಯರು ತಾನಿರ್ದಲ್ಲಿ, ಕೋಟ್ಯಾನುಕೋಟಿ ಕಾಲರುದ್ರರು ತಾನಿರ್ದಲ್ಲಿ, ಅಸಂಖ್ಯಾತ ಪ್ರಳಯಕಾಲರುದ್ರರು ತಾನಿರ್ದಲ್ಲಿ, ಶತಕೋಟಿ ಸಾವಿರ ಬ್ರಹ್ಮಕಪಾಲ ವಿಷ್ಣುಕಂಕಾಳ ದಂಡವ ಧರಿಸಿದ ಕಾಲಭೈರವರು ತಾನಿರ್ದಲ್ಲಿ, ತನ್ನಿಂದದ್ಥಿಕವಾದ ವಸ್ತುವೊಂದಿಲ್ಲವಾಗಿ ತಾನೆ ಸಚ್ಚಿದಾನಂದ ನಿತ್ಯಪರಿಪೂರ್ಣವಾಗಿಹ ಪರಶಿವತತ್ವ ನೋಡಾ ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ವಿರತಿ ವಿರತಿಯೆಂದು ವಿರತಿಯ ಹೊಲಬನರಿಯದೆ ಹಂಬಲಿಸಿ ಹಲಬುತಿಪ್ಪರಣ್ಣ. ಕಠಿಣ ಪದಾರ್ಥವ ಸವಿದೊಡೆ ವಿರತಿಯೆ? ಕಠಿಣ ಪದಾರ್ಥವನೊಲ್ಲೆನೆಂದು ಕಳೆದೊಡೆ ವಿರತಿಯೆ? ವೃಕ್ಷದಡಿಯ ಫಲಂಗಳನೆತ್ತಿ ಮೆದ್ದೊಡೆ ವಿರತಿಯೆ? ಬಿದ್ದ ಫಲಂಗಳ ಮುಟ್ಟೆನೆಂದು ಭಾಷೆಯ ಮಾಡಿದೊಡೆ ವಿರತಿಯೆ? ಕ್ರೀಯೆಲ್ಲಿ ಮುಳುಗಿದೊಡೆ ವಿರತಿಯೆ? ನಿಷ್ಕಿ ್ರೀಯ ಮಾಡಿದೊಡೆ ವಿರತಿಯೆ? ಮೌನಗೊಂಡಡೆ ವಿರತಿಯೆ? ನಿರ್ಮೌನವಾದಡೆ ವಿರತಿಯೆ? ಕ್ರೀಯನಾಚರಿಸಿ, ಅರಿವಿನಮಾತ ಬಣ್ಣವಿಟ್ಟು ನುಡಿದರೆ ವಿರತಿಯೆ? ಇಂತಿವೆಲ್ಲವು ವಿರತಿಯ ನೆಲೆಯನರಿಯದೆ ತಲೆಬಾಲಗೆಟ್ಟು ಹೋದವು. ಇನ್ನು, ಮುಕ್ತಿಪಥವ ತೋರುವ ವಿರತಿಯ ಬಗೆಯಾವುದೆಂದರೆ- ಷಟ್ಸ ್ಥಲಕ್ಕೆ ಒಪ್ಪವಿಟ್ಟು ಎತ್ತಿದ ಮಾರ್ಗವನಿಳುಪದೆ ಹಿಡಿದ ವ್ರತನೇಮಂಗಳಲ್ಲಿ ನೈಷೆ*ಯಾಗಿ ಈಷಣತ್ರಯಂಗಳ ಘಾಸಿಮಾಡಿ ಬಹಿರಂಗಮದಂಗಳ ಬಾಯ ಸೀಳಿ ಅಂತರಂಗಮದಂಗಳ ಸಂತೋಷಮಂ ಕೆಡಿಸಿ ಅಷ್ಟಮೂರ್ತಿ ಅಷ್ಟಮದಂಗಳ ನಷ್ಟವ ಮಾಡಿ ಎಂಟೆರಡುದಿಕ್ಕಿನಲ್ಲಿ ಹರಿವ ದಶವಾಯುಗಳ ಗಂಟಲ ಮುರಿದು ಸುಗುಣ ದುರ್ಗುಣಂಗಳ ನಗೆಗೊಳಗುಮಾಡಿ ನವನಾಳಂಗಳ ಮುಂಬಾಗಿಲಲ್ಲಿ ನವಲಿಂಗಂಗಳ ಸಿಂಗರಿಸಿ ತನು ಮನವ ಸೋಂಕಿದ ಸಾಕಾರ ನಿರಾಕಾರವೆಂಬ ಪದಾರ್ಥಂಗಳ ವಂಚಿಸದೆ ಆಯಾಯ ಲಿಂಗಂಗಳಿಗೆ ತೃಪ್ತಿಯಂ ಮಾಡಿ ನಡೆವಲ್ಲಿ ನುಡಿವಲ್ಲಿ ಮಂತ್ರಂಗಳಲ್ಲಿ ಮೈಮರೆದಿರದೆ ಆಚಾರಾದಿ ಮಹಾಲಿಂಗಗಳ ಷಡುವರ್ಣದ ಬೆಳಗಂ ಧ್ಯಾನ ಮೌನದಲ್ಲಿಯೇ ಕಣ್ಣಿಲ್ಲದೆ ಕಂಡು ಗಂಗೆ ಯಮುನೆ ಸರಸ್ವತಿಯೆಂಬ ಮೂರು ಗಂಗೆ ಕೂಡಿದ ಮಧ್ಯವೀಗ ಸಂಗಮಕ್ಷೇತ್ರ. ಆ ಸಂಗಮಕ್ಷೇತ್ರದ ರತ್ನಮಂಟಪದಲ್ಲಿ ನೆಲೆಸಿಪ್ಪ ತೋಂಟದ ಅಲ್ಲಮನೆಂಬ ಪರಬ್ರಹ್ಮದ ಬೆಳಗಿನ ಪ್ರಭೆಯ ಮೊತ್ತಮಂ ಕಂಡು ಆ ತೋಂಟದ ಅಲ್ಲಮನೆಂಬ ಪರಬ್ರಹ್ಮದ ದಿವ್ಯ ಶ್ರೀಚರಣಮಂ ಭಾವಪುಷ್ಪಂಗಳೆಂಬ ಜಾಜಿ ಮಲ್ಲಿಗೆ ಕೆಂದಾವರೆಯಲ್ಲಿ ಪೂಜೆಯಂ ಮಾಡಿ ಜೀವನ್ಮುಕ್ತಿಯಾದುದೀಗ ನಿಜ ವಿರಕ್ತಿ. ಇಂತಪ್ಪ ವಿರಕ್ತಿಯನಳವಡಿಸಿಕೊಳ್ಳದೆ ಮಾತಿಂಗೆ ಮಾತು ಕೊಟ್ಟು ಮತಿಮರುಳಾಗಿಪ್ಪವರಿಗಂಜಿ ನಾನು ಶರಣೆಂಬೆನಯ್ಯಾ, ಘನಲಿಂಗಿಯ ಮೋಹದ ಚೆನ್ನಮಲ್ಲಿಕಾರ್ಜುನಾ.
--------------
ಘನಲಿಂಗಿದೇವ
ಕೃತಯುಗ, ತ್ರೇತಾಯುಗ, ದ್ವಾಪರಯುಗ, ಕಲಿಯುಗಂಗಳು ಭವರಾಟಳದಲ್ಲಿ ತಿರುಗುತ್ತಿಪ್ಪಲ್ಲಿ ಅನಂತ ಕೋಟ್ಯನುಕೋಟಿ ಯುಗಂಗಳು ಮಡಿದುಹೋದವು, ಅನಂತ ಜಲಪ್ರಳಯಂಗಳು ಸುರಿದು ಹೋದವು. ಹದಿನಾಲ್ಕು ಲೋಕಂಗಳೆಂಬ ಅನಂತಕೋಟಿ ಬ್ರಹ್ಮಾಂಡಗಳೆಲ್ಲ ಲಯವಾಗಿ ಹೋದವು. ಇದರೊಳಗೆ ಆವ ಲೋಕದಲ್ಲಿ ಆವ ಯುಗದಲ್ಲಿ ಪ್ರಾಣಲಿಂಗ, ಲಿಂಗಪ್ರಾಣವೆಂಬ ಭೇದವನರುಹಿದವರಾರು ಹೇಳಾ ಗಂಗೆ ಗೌರೀವಲ್ಲಭರು ಮೊದಲಾದ ಅನಂತಕೋಟಿ ರುದ್ರಾದಿಗಳೆಲ್ಲರೂ ಪ್ರಾಣಲಿಂಗಸಂಬಂಧದ ಹೊಲಬನರಿಯದೆ ಅಣಿಮಾದಿ ಚತುರ್ವಿಧ ಫಲಪ್ರಾಪ್ತಿಗೆ ಒಳಗಾದರು. ಶಿವಾಚಾರದ ವಿಚಾರವನರಿಯದೆ ಜಗವು ಕೆಟ್ಟುಹೋಹುದೆಂದು ಪರಮಪುರುಷಾರ್ಥಕಾರಣವಾಗಿ ಮತ್ರ್ಯದಲ್ಲಿ ಅವತರಿಸಿ,ಗುರುಲಿಂಗಜಂಗಮಪಾದೋದಕಪ್ರಸಾದವೆಂಬ ಪಂಚಾಚಾರಸ್ಥಲವ ನೆಲೆಗೊಳಿಸಿ, ಷಡುಸ್ಥಲವೆಂಬ ಮಹಾನುಭಾವಮಂ ಕರತಳಾಮಳಕವಾಗಿ ಸ್ಥಿತಗೊಳಿಸಿ, ಪ್ರಾಣಲಿಂಗ, ಲಿಂಗಪ್ರಾಣವೆಂಬ ಭೇದವನೆನಗೆ ತಿಳುಹಿ, ಎನ್ನ ಭ್ರಾಂತಿಸೂತಕವ ಬಿಡಿಸಿ, ಲಿಂಗೈಕ್ಯವೆಂಬುದೆನಗೆ ತೋರಿದೆಯಾಗಿ ನಿನ್ನಿಂದಲಾನು ಸಂಗನಬಸವಣ್ಣನೆಂಬ ಹೆಸರುವಡೆದನು. ಕೂಡಲಸಂಗಮದೇವರು ಸಾಕ್ಷಿಯಾಗಿ ಎನಗೆ ನೀನು ಪರಮಾರಾಧ್ಯ ಕಾಣಾ, ಚೆನ್ನಬಸವಣ್ಣಾ.
--------------
ಬಸವಣ್ಣ
ಪಾಪವ ಮಾಡಿ ಮುಳುಗಿದಡೇನು, ಮುಳುಗಿ ಪಾಪವ ಮಾಡಿದಡೇನು? ಗಂಗೆ ಪದವಿಯ ಕೊಟ್ಟಡೆ ಅದು ದುರ್ಗುಣವೆ ಅಯ್ಯಾ. ಸದ್ಗುಣವಾದಡೂ ಆಗಲಿ, ಈ ಮನುಜರು ಮಾಡುವ ಕರ್ಮಕ್ಕೆ ಆಕೆಯ ಸದ್ಗುಣ ಸಂಧಾನವಾಯಿತ್ತು ನೋಡಾ, ಕಪಿಲಸಿದ್ಧಮಲ್ಲಿಕಾರ್ಜುನಾ.
--------------
ಸಿದ್ಧರಾಮೇಶ್ವರ
ಕಾಳಿಕಾದೇವಿ, ಚಾಮುಂಡಿ, ಗಂಗೆ ಗೌರಿ, ಬನಶಂಕರಿ, ಎಲ್ಲಿ, ಏಕಲಾತಿ, ಹುಲಗಿ, ಹೊಸೂರಿ, ಸತ್ತವರು, ಹೆತ್ತವರು ಇಂತೀ ಹಲವು ಪಿಶಾಚಿಗಳ ಹೆಸರಿಂದ ಇದಿರಿಟ್ಟು ಆರಾಧಿಸಿ, ಅದರ ನೈವೇದ್ಯವೆಂದು ಶ್ರೀಗುರುವಿತ್ತ ಲಿಂಗಕ್ಕೆ ತೋರಿ ಭುಂಜಿಸುವ ಶಿವದ್ರೋಹಿಗೆ ಗುರುವಿಲ್ಲ, ಲಿಂಗವಿಲ್ಲ, ಜಂಗಮವಿಲ್ಲ, ಪಾದೋದಕವಿಲ್ಲ, ಪ್ರಸಾದವಿಲ್ಲ ಕಾಣಾ ಸಂಗನಬಸವೇಶ್ವರ.
--------------
ಗುರುಸಿದ್ಧದೇವರು
ಹೊರಗಣ ಒಂಬತ್ತು ಬಾಗಿಲವ ಮುಚ್ಚಿ ಒಳಗಣ ಅಂಬರದ ಬಾಗಿಲ ಬೀಗವ ತೆಗೆದು ಒಳಹೊಕ್ಕು ನೋಡಲು, ಗಂಗೆ ಸರಸ್ವತಿ ಯಮುನೆಯೆಂಬ ತ್ರಿನದಿಗಳು ಕೂಡಿದ ಠಾವಿನಲ್ಲಿ ಸಂಗಮಕ್ಷೇತ್ರವೆಂಬ ರಂಗಮಂಟಪವುಂಟು. ಆ ರಂಗಮಂಟಪದಲ್ಲಿ ರವಿಕೋಟಿಪ್ರಭೆಯಿಂದೆ ರಾಜಿಸುವ ಮಹಾಲಿಂಗವ ಕಂಡು, ಆ ಮಹಾಲಿಂಗಕ್ಕೆ ತನ್ನಾತ್ಮಸಂಬಂಧವಾದ ದ್ರವ್ಯಂಗಳಿಂದರ್ಚಿಸಿ, ಆ ಮಹಾಲಿಂಗದ ಬೆಳಗನು ಕಂಗಳು ತುಂಬಿ ನೋಡಿ ಮನ ಸಂತೋಷಗೊಂಡು, ಅಲ್ಲಿಂದತ್ತ ಪಶ್ಚಿಮದಿಕ್ಕಿನಲ್ಲಿ ಮಹಾಕೈಲಾಸವಿರ್ಪುದನು ತನ್ನ ಸ್ವಾತ್ಮಜ್ಞಾನದಿಂದ ತಿಳಿದು ನೋಡಿ, ಎಡಬಲದ ಬಟ್ಟೆಯ ಮೆಟ್ಟದೆ ನಟ್ಟನಡುಮಧ್ಯಮಾರ್ಗವಿಡಿದು ಹೋಗಿ, ಕೈಲಾಸದ ಪೂರ್ವದಿಕ್ಕಿನ ಹೆಬ್ಬಾಗಿಲ ಉಪ್ಪರ ಗೋಪುರವ ಕಂಡು ಒಳಹೊಕ್ಕು ಹೋಗಿ ಕಂಗಳಿಗೆ ಮಂಗಳವಾದ ಶಿವಮಹಾಸಭೆಯ ಕಂಡು, ಅಲ್ಲಿ ಹೊಡೆವ ಭೇರಿಯನಾದ, ತುಡುಮು ತಾಳ ಮದ್ದಳೆಯನಾದ, ಗಡಗಡ ಝಲ್ಲೆಂಬ ಸಮಾಳ ಕರಡಿ ಕೌಸಾಳನಾದ ನುಡಿಸುವ ವೀಣೆ ಕಿನ್ನರಿ ಸ್ವರಮಂಡಲ ತಂಬೂರಿ ಕಾಮಾಕ್ಷಿಯನಾದ, ಭೋರಿಡುವ ಶಂಖ ಘಂಟೆಯನಾದ, ಸ್ವರಗೈವ ನಾಗಸ್ವರ ಕೊಳಲು ಸನಾಯದ ನಾದ, ಕೂಗಿಡುವ ಕಹಳೆ ಹೆಗ್ಗಹಳೆ ಚಿನಿಕಹಳೆ ಕರಣೆಯನಾದ, ಇಂತಿವು ಮೊದಲಾದ ನಾನಾ ತೆರದ ನಾದಂಗಳನು ಕಿವಿದುಂಬಿ ಕೇಳಿ ಮನದುಂಬಿ ಸಂತೋಷಿಸಿ, ಅಲ್ಲಿಂದ ಮುಂದಕ್ಕೆ ಹೋಗಿ ಸೂರ್ಯವೀಥಿಯ ಕಂಡು ಪೊಕ್ಕು, ಅಲ್ಲಿ ನಿಂದು ಓಲಗಂಗೊಡುವ ಮೂವತ್ತೆರಡು ತೆರದ ತೂರ್ಯಗಣಂಗಳಂ ಕಂಡು, ಅಲ್ಲಿಂದ ಮುಂದಕ್ಕೆ ಹೋಗಿ ಸೋಮವೀಥಿಯ ಕಂಡು ಪೊಕ್ಕು, ಅಲ್ಲಿ ನಿಂದು ಓಲಗಂಗೊಡುವ ಹದಿನಾರು ತೆರದ ಪ್ರಮಥಗಣಂಗಳ ಕಂಡು ಅಲ್ಲಿಂದ ಮುಂದಕ್ಕೆ ಹೋಗಿ ಅನಲವೀಥಿಯ ಕಂಡು ಪೊಕ್ಕು, ಅಲ್ಲಿ ಅಷ್ಟದಿಕ್ಕುಗಳಲ್ಲಿ ನಿಂದು ಓಲಗಂಗೊಡುವ ಅಷ್ಟ ತೆರದ ಅಮರಗಣಂಗಳ ಕಂಡು, ಅಲ್ಲಿಂದ ಮುಂದೆ ಹೋಗಿ ಚತುರ್ದಿಕ್ಕಿನಲ್ಲಿ ನಿಂದು ಓಲಗಂಗೊಡುವ ಚತುಃಶಕ್ತಿಯರ ಸಮ್ಮೇಳವ ಕಂಡು, ಅಲ್ಲಿಂದ ಮುಂದಕ್ಕೆ ಹೋಗಿ ನಟ್ಟನಡುವಿರ್ದ ಶೃಂಗಾರಮಂಟಪದ ಮಹಾಸದರಿನಲ್ಲಿ ಮೂರ್ತಿಗೊಂಡಿರ್ದ ನಿಷ್ಕಲ ಪರಶಿವನ ಕಂಡು ತನು ಉಬ್ಬಿ ಮನ ಕರಗಿ, ಕಂಗಳಲ್ಲಿ ಪರಿಣಾಮಜಲ ಉಕ್ಕಿ ಕಡೆಗೋಡಿವರಿವುತ್ತ, ಉರಿಕರ್ಪುರ ಸಂಯೋಗದಂತೆ ಆ ನಿಷ್ಕಲಪರಶಿವನೊಡನೆ ಬೆರೆದು ಪರಿಪೂರ್ಣವಾದ ಮಹಾಶರಣರ ತೋರಿಸಿ ಬದುಕಿಸಯ್ಯಾ ಎನ್ನ ಅಖಂಡೇಶ್ವರಾ.
--------------
ಷಣ್ಮುಖಸ್ವಾಮಿ
ನಾನು ಭಕ್ತನಾದಡೆ, ನೀನು ದೇವನಾದಡೆ, ನೋಡುವೆವೆ ಇಬ್ಬರ ಸಮರಸವನೊಂದು ಮಾಡಿ? ಭೂಮಿಯಾಕಾಶವನೊಂದು ಮಾಡಿ, ಚಂದ್ರ_ಸೂರ್ಯರಿಬ್ಬರ ತಾಳವ ಮಾಡಿ ಆಡುವೆವೆ? ಜಡೆಯ ಮೇಲಣ ಗಂಗೆ ನೀನು ಕೇಳಾ, ತೊಡೆಯ ಮೇಲಣ Uõ್ಞರಿ ನೀನು ಕೇಳಾ, ಗುಹೇಶ್ವರನೆಂಬ ಲಿಂಗವು ಎನ್ನ ಕೈಯಲ್ಲಿ ಸತ್ತಡೆ, ರಂಡೆಗೂಳನುಂಬುದು ನಿಮಗೆ ಲೇಸೆ?
--------------
ಅಲ್ಲಮಪ್ರಭುದೇವರು
ಐವತ್ತಾರು ದೇಶದೊಳಗುಳ್ಳ ಸ್ಥಾವರಂಗಳ ತನ್ನೊಳಗುಳ್ಳ ಭಕ್ತಿಯಲ್ಲರಿದರ್ಚಿಸಬಲ್ಲರೆ ಶರಣ. ಆ ಶರಣ ಶಿವನಂತಿಪ್ಪ ನೋಡಿರೆ. ಕಾಲತ್ರಿಪುರವ ಸುಟ್ಟು ಬೂದಿಯನು ಸರ್ವಾಂಗದಲ್ಲಿ ಧರಿಸಿರ್ದ ನೋಡಿರೆ. ಸರ್ಪಾಭರಣಭೂಸಿತನಾಗಿ ಚಂದ್ರನ ಮಸ್ತಕದಲ್ಲಿ ತಳೆದುಕೊಂಡಿರ್ದ ನೋಡಿರೆ. ಬ್ರಹ್ಮಕಪಾಲ ಕೈಯಲ್ಲಿ ಪಿಡಿದು, ಮಾಯೆಯ ಗೆಲಿದ ನೋಡಿರೆ. ನಾರಾಯಣನ ಕಣ್ಣ ಪಾದದಲ್ಲಿರಿಸಿ, ಗಂಗೆ ಗೌರಿಯ ಸಂಪರ್ಕ ಒಳಹೊರಗೆ ಪರಿಪೂರ್ಣ ನೋಡಿರೆ, ತನ್ನೊಲುಮೆಯ ಇರವೆಯಲ್ಲಿ ಕೈಲಾಸಮಧ್ಯಪೀಠ ಪ್ರಕಾಶದೊಳಗು ನೋಡಿರೆ ಹುಟ್ಟಿ ಬೆಳೆದುದ ಸವರಿಬಿಟ್ಟು ಕಟ್ಟಾಳುಯೆನಿಸಿ ಕಾಣುವ ಗುರುನಿರಂಜನ ಚನ್ನಬಸವಲಿಂಗದೊಳಗೆ.
--------------
ದೇಶಿಕೇಂದ್ರ ಸಂಗನಬಸವಯ್ಯ
ಸರ್ಪನ ಮೇಲೆ ಪೃಥ್ವಿ ರಚಿಸದಂದು, ಸಮುದ್ರಂಗಳೇಳು ಹಾಸದಂದು, ಅಷ್ಟದಿಗುದಂತಿಗಳು ಹುಟ್ಟದಂದು, ಶಂಖು ಶಲಾಕೆಯಿಲ್ಲದಂದು, ಗಂಗೆ ಗೌರೀವಲ್ಲಭರಿಲ್ಲದಂದು, ಬ್ರಹ್ಮ ವಿಷ್ಣು ರುದ್ರ ಈಶ್ವರ ಸದಾಶಿವ ಈ ಐವರೂ ಹುಟ್ಟದಂದು, ಈ ಐವರ ತಾಯಿತಂದೆ ಇಲ್ಲದಂದು ನಿಜಗುರು ಕಪಿಲಸಿದ್ಧಮಲ್ಲೇಶ್ವರಾ, ನಿಮ್ಮ ಹೆಸರೇನಯ್ಯಾ?
--------------
ಸಿದ್ಧರಾಮೇಶ್ವರ
ಭಕ್ತಿಭಾಂಡದ ಶಿವಭಕ್ತರ ನಿಷೇಧವ ಮಾಡುವ ಕರ್ಮಭಾಂಡದ ದ್ವಿಜರು ನೀವು ಕೇಳಿಭೋ : `ಸತ್ಯಂ ಭೋ ಬ್ರೂತ ಪಂಚಪ್ರಾಣ ಇಂದ್ರಿಯನಿಗ್ರಹಮೆಂದೋದಿ ಗುದ್ದಿ ಗುದ್ದಿ ಹೋತನ ತಿಂಬುದಾವಾಚಾರವೊ ? `ಪಿತಾಮಹಶ್ಚ ವೈಶ್ಯಸ್ತು ಕ್ಷತ್ರಿಯೋ ಪರಯೋ ಹರಿಃ ಬ್ರಾಹ್ಮಣೋ ಭಗವಾನ್ ರುದ್ರಃ ಸರ್ವೇಷ್ವ್ಯುತ್ತಮೋತ್ತಮಃ ಎಂಬ ಶ್ರುತಿಯ ನೋಡಿ, ತಮ್ಮ ಕುಲದೈವವಹ ಬ್ರಾಹ್ಮಣನಹ ರುದ್ರನ ನಿಂದಿಸಿ, ತಮಗಿಂದ ಕೀಳುಜಾತಿಯಹ ಕ್ಷತ್ರಿಯ ಹರಿಯ ಆರಾಧಿಸುವ ಕುಲಹೀನರು ನೀವು ಕೇಳಿಭೋ : `ಜನ್ಮನಾ ಜಾಯತೇ ಶೂದ್ರಃ ಕರ್ಮಣಾ ದ್ವಿಜ ಉಚ್ಯತೇ `ವೇದಾಭ್ಯಾಸೇನ ವಿಪ್ರಸ್ತು ಬ್ರಹ್ಮಣಾ ಚರಂತೀತಿ ಬ್ರಾಹ್ಮಣಃ ಎಂಬ ಶ್ರುತಿಯನೋದಿ, ಪರಬ್ರಹ್ಮನಂತಹ ಶಿವಲಿಂಗಪೂಜೆಯನಾಚರಿಸಿ ಬ್ರಾಹ್ಮಣತ್ವವನೈ[ದದೆ] ಶತಯಾಗಂಗಳ ಮಾಡಿ ಶೂದ್ರನಹ ಇಂದ್ರತ್ವವ ಬಯಸುವ ಅಧಮರು ನಿವು ಕೇಳಿಭೋ : `ಜನ್ಮನಾ ಜಾಯತೇ ಶೂದ್ರಃ ಮಾತಾ ಸಾ ಪ್ರಥಮಂ ಶೂದ್ರಾಣಿ ನಚೋಪದೇಶಃ ಗಾಯತ್ರೀ ನ ಚ ಮೌಂಜೀ ನ ಚ ಕ್ರಿಯಾ ಎಂದುದಾಗಿ, ದೀಕ್ಷೆಯಿಲ್ಲದೆ ಸತಿಶೂದ್ರಗಿತ್ತಿಗೆ ಹುಟ್ಟಿದವನೊಡನುಂಬ ಅನಾಚಾರಿಗೆ ಎಲ್ಲಿಯದೊ ಬ್ರಾಹ್ಮಣತ್ವ ? ಆವ ಜಾತಿಯವನಾದರೇನು ಶಿವಭಕ್ತನೆ ಬ್ರಾಹ್ಮಣ. ಅದಕ್ಕೆ ಸಾಕ್ಷಿ : . `ತಪಸಾ ಬ್ರಾಹ್ಮಣೋ[s]ಭವತ್ ಸಾಂಖ್ಯಾಯನ ಮಹಾಮುನಿಃ ತಪಸಾ ಬ್ರಾಹ್ಮಣೋ[s]ಭವತ್ ಗೌತಮಸ್ತು ಮಹಾಮುನಿಃ ಜಾತಿಂ ನ ಕಾರಯೇತ್ತೇಷು ಶ್ರೇಷಾ*ಃ ಸಮಭವಂಸ್ತತಃ ತಜ್ಜಾತಿರಭವತ್ತೇನ' ಎಂದುದಾಗಿ, ತಮ್ಮ ತಮ್ಮ ಗೋತ್ರಂಗಳೆ ಸಾಕ್ಷಿಯಾಗಿ ಸಾರುತ್ತಿರಲು ಕುಭ್ರಮೆಯಾತಕ್ಕೆ ? ಶ್ವಪಚೋ[s]ಪಿ ಮುನಿಶ್ರೇಷ*ಃ ಶಿವಭಕ್ತಿಸಮನ್ವಿತಃ ಶಿವಭಕ್ತಿವಿಹೀನಸ್ತು ಶ್ವಪಚೋ[s]ಪಿ ದ್ವಿಜಾಧಮಃ ಎಂದುದಾಗಿ ಶಿವಭಕ್ತನೆ ಕುಲಜ, ಶಿವಭಕ್ತಿ ಇಲ್ಲದವನೆ ಶ್ವಪಚನೆಂದರಿಯದ ಅಜ್ಞಾನಿಗಳು ನೀವು ಕೇಳಿಭೋ ! `ಏಕ ಏವ ರುದ್ರೋ ನ ದ್ವಿತೀಯಾಯತಸ್ಥೇ' ಎಂದು ವೇದವನೋದಿ `ಪಶುಪತಯೇ ನಮಃ' ಎಂದಾ ರುದ್ರವನೋದಿ ಶಿವನೆ ಪತಿ ಮಿಕ್ಕಿನ ದೈವಂಗಳೆಲ್ಲ ಪಶುಗಳೆಂಬುದ ತಿಳಿದು ಮತ್ತೆಯೂ ಈ ದ್ವಿಜರು ಕಾಣಲರಿಯರು. ಹರಹರನೊಂದೆಯೆಂಬ ನರಗುರಿಗಳು ನೀವು ಕೇಳಿಭೋ ! ಪಾರಾಶ[ರ] ಪುರಾಣೇ : ಆದೌ ರುದ್ರಾಂಗಮುತ್ಪತ್ತಿಃ ಮುಖೇ ಬ್ರಾಹ್ಮಣವೀಶ್ವರಃ ವಿಷ್ಣುಂ ಕ್ಷತ್ರಿಯಮಿತ್ಯಾಹುರ್ಬಾಹುನಾ ಚ ಅವಸ್ಥಿತಃ ವೈಶ್ಯಶ್ಚ ಬ್ರಹ್ಮಾ ಇತ್ಯಾಹುಃ ಲಿಂಗಾದೇವ ಅವಸ್ಥಿತಃ ಸುರಪೋ ಶೂದ್ರಯಿತ್ಯಾಹುಃ ದೇವಪಾದಾದವಿಸ್ಥಿತಃ ಎಂದುದಾಗಿ, ರುದ್ರನ ಮುಖದಲ್ಲಿ ಹುಟ್ಟಿದವನೆ ಬ್ರಾಹ್ಮಣ, ಮಿಕ್ಕಾದ ವಿಪ್ರರೆಲ್ಲರು ಋಷಿಗೋತ್ರದಲ್ಲಿ ಹುಟ್ಟಿದರು. ಆ ಋಷಿಮೂಲದ ವಿಪ್ರರೆಲ್ಲರು ಅಧಮಜಾತಿ ಅಧಮಜಾತಿಯಾದರೇನು ? ರುದ್ರಭಕ್ತರಾದ ಕಾರಣ ಬ್ರಾಹ್ಮಣರಾದರು. ಈ ವರ್ಮವನರಿಯದ ಚಾಂಡಾಲ ವಿಪ್ರರ್ಗೇನೂ ಸಂಬಂಧವಿಲ್ಲ. ಕಾಕ ರುದ್ರನ ಮುಖದಲ್ಲಿ ಉದ್ಭವವೆಂಬುದಕ್ಕೆ ಶ್ವಾನಸೂಕರರೂಪೇ ಪ್ರೇತಪಿಂಡ ಪ್ರದಾನತಃ ಪ್ರೇತತ್ವಂ ಚ ಸದಾ ಸ್ಯಾತ್ ತಥಾ ಧರ್ಮೇಣ ಲುಪ್ಯತೇ ಎಂದುದಾಗಿ ಆಗಮಾರ್ಥವನರಿಯದೆ, ಪ್ರೇತಪಿಂಡವನಿಕ್ಕುವ ಪಾತಕರು, [ಪ್ರಾಣಾಯಸ್ವಾಹಾ]ಅಪಾನಾಯ ಸ್ವಾಹಾ, ವ್ಯಾನಾಯ ಸ್ವಾಹಾ ಉದಾನಾಯ ಸ್ವಾಹಾ, ಸಮಾನಾಯ ಸ್ವಾಹಾ' ಎಂದು ಭೂತಬಲಿಯ ಬೆಕ್ಕು ನಾಯಿಗೆ ಹಾಕಿ ಮಿಕ್ಕ ಭೂತಶೇಷವ ಕೊಂಬ ಅಕುಲಜರು, ನೀವು ಕೇಳಿಭೋ ! `ವಸುರೂಪೋ ಮಧ್ಯಪಿಂಡಃ ಪುತ್ರ¥õ್ಞತ್ರಪ್ರವರ್ಧನಃ' ಎಂದು, ರುದ್ರಪ್ರಸಾದವನೆ ಕೊಂಡು ರುದ್ರಪಿಂಡದಿಂದ ಹುಟ್ಟಿ, ದೀಕ್ಷಾಕಾಲದಲ್ಲಿ ಭಸಿತವ ಧರಿಸಿ, ಬ್ರಹ್ಮಕಪಾಲಪಾತ್ರೆಯಂ ಪಿಡಿದು, ಪಲಾಶಕಂಕಾಳದಂಡಮಂ ಪಿಡಿದು, `ಭವತೀ ಭಿಕ್ಷಾಂ ದೇಹಿ'ಯೆಂದು ಭಿಕ್ಷಮಂ ಬೇಡಿ ಪಿತೃಕಾರ್ಯದಲ್ಲಿ `ವಿಶ್ವೇ ದೇವಾಂಸ್ತರ್ಪಯಾಮಿ'ಯೆಂದರ್ಚಿಸಿ, ಮರಣಕಾಲದಲ್ಲಿ ರುದ್ರಭೂಮಿಯಲ್ಲಿ ರುದ್ರಾಗ್ನಿಯಿಂದ ದಹನ ರುದ್ರವಾಹನದ ಬಾಲವಿಡಿದು ಸ್ವರ್ಗವನೆಯ್ದಿದರು, ರುದ್ರಭಕ್ತಿವಿರುದ್ಧ ವಿಚಾರಹೀನರು. `ತ್ರ್ಯಾಯುಕ್ಷಂ ಜಮದಗ್ನೇಃ ಕಶ್ಯಪಸ್ಯ ತ್ರಿಯಾಯುಷಂ, ಅಗಸ್ತ್ಯಸ್ಯ ತ್ರಿಯಾಯುಷಂನತನ್ಮೇಡಿಸ್ತುಫತ್ರಿಯಾ ಶತಸಯುಷಂ ಎಂದು ಸಕಲಋಷಿಗಳು ಶ್ರೀ ವಿಭೂತಿಯನು ಧರಿಸಿ, ಬಹಳಾಯುಷ್ಯಮಂ ಪಡೆದರೆಂದು ಮತ್ತೆಯು ಯಜುಸ್ಸಿನಲ್ಲಿ ದೀಕ್ಷೆಯನೈದಲ್ಲಿ, `ಭೂತಿವಾಂಶ್ಚ ಪ್ರಿಯಂ ಹೋತವ್ಯಂ'ಯೆಂದು, ಶ್ರೀವಿಭೂತಿಯನೆ ಧರಿಸಹೇಳಿತ್ತು ವೇದವು. `ಗೋಪೀ ಮಲಿನಧಾರೀ ತು ಶಿವಂ ಸ್ಪೃಶತಿ ಯೋ ದ್ವಿಜಃ ತದೈಕವಿಂಶತಿಕುಲಂ ಸಾಕ್ಷಾತ್ತು ನರಕಂ ವ್ರಜೇತ್ ' ಎಂದು, ಗೋಪಿ ಮಲಿನ ಚಂದನವನಿಟ್ಟು, ಪಾತಕರು[ವ] ಶಿವಲಿಂಗ ಮುಟ್ಟಿದರೆ ತಮ್ಮಿಪ್ಪತ್ತೊಂದು ಕುಲಸಹಿತ ಕೇಡಿಲ್ಲದ ನರಕದಲ್ಲಿ ಬೀಳುವರೆಂದರಿಯದೆ ಮುಟ್ಟಿಯನಿಟ್ಟ ಭ್ರಷ್ಟರು, ಮತ್ಸ್ಯ ಕೂರ್ಮ ವರಾಹ ನಾರಸಿಂಹ ಈ ನಾಲ್ಕೂ ಅವತಾರದಲ್ಲಿ ನೀರಿಂದ ಬಲಿ ಧಾರೆಯನೆರೆದನೆಂಬುದನರಿದು, ವಿಷ್ಣುವಿನ ಪಾದದಲ್ಲಿ ಗಂಗೆ ಹುಟ್ಟಿತೆಂಬ ವಿಚಾರಹೀನರು `ವಿಯದ್ವಿಷ್ಣುಪದಂ ಪ್ರೋಕ್ತಂ ಪುಂಸ್ಯಾಕಾಶವಿಹಾಯಸೀ ವಿಹಾಯಸೋ[s]ಪಿನಾಕೋ[s]ಪಿ ದ್ಯುರಪಿ ಸ್ಯಾತ್ತಿದವ್ಯಯಂ' ಎಂದು ನಿಘಂಟಿನಲ್ಲಿ ಆಕಾಶದ ಹೆಸರು ವಿಷ್ಣುಪದಿ, ಆಕಾಶಗಂಗೆ ಮುನ್ನಲುಂಟೆಂಬುದನರಿತು, ವಿಷ್ಣುವಿನ ಕಾಲಲ್ಲಿ ಗಂಗೆ ಹುಟ್ಟಿತೆಂಬ ದುಷ್ಟರು, ವೇದಕ್ಕೆ ನೆಲೆಗಟ್ಟು ಓಂಕಾರ, ಬ್ರಾಹ್ಮಣಕ್ಕೆ ನೆಲೆಗಟ್ಟು ಗಾಯತ್ರಿಯಲ್ಲಿ ಶಿವನೆ ದೈವವೆಂದಿತ್ತು. `ಓಂ ಭೂಃ ಓಂ ಭುವಃ ಓಂ ಸುವಃ ಓಂ ಮಹಃ ಓಂ ಜನಃ ಓಂ ತಪಃ ಓಂ ಸತ್ಯಂ ಓಂ ತತ್ಸವಿತುರ್ವರೇಣ್ಯಂ ಭರ್ಗೋ ದೇವಸ್ಯ ಧೀಮಹಿ ಧಿಯೋ ಯೋ ನಃ ಪ್ರಚೋದಯಾತ್ ಹರ ಹರಿಭಕ್ತನೆಂದನಿಸುವ ವಿಚಾರಹೀನರು ನೀವು ಕೇಳಿಭೋ ! ಹರಿ ಶಿವನ ಭಕ್ತನೆಂಬುವದಕ್ಕೆ ಸಾವಿರಕಮಲ ಕೊರತೆಗೆ ತನ್ನ ನಯನ ಕಮಲಮಂ ಕಳೆದು ಶಿವನಂಘ್ರಿಗರ್ಪಿಸಿ, ಚಕ್ರಮಂ ಪಡೆದನೆಂದು ಮಹಿಮದಲ್ಲಿ ಹರಿಸ್ತೇ ಸಾಹಸ್ರಂ ಕಮಲಬಲಿಯಾಧಾಯ ಪದಯೋಃ' ಎಂದೋದಿ ಮರೆದ ಮತಿಭ್ರಷ್ಟರು ನೀವು ಕೇಳಿಭೋ ! ಹರನೆ ಕರ್ತ, ಹರಿಯೆ ಭೃತ್ಯನೆಂಬುದಕ್ಕೆ ರಾಮಪ್ರತಿಷೆ* ಶಿವಲಿಂಗ[ದ] ಮೂರ್ತಿಗಳಿಂ ಕಾಣಿರೆ, ಕಂಡು ತಿಳಿಯಲರಿಯದ ಹುಲಮನುಜರು ಶ್ರೀರಾಮನ ಗುರು ವಶಿಷ* ಹಂಪೆಯಲ್ಲಿ ವಿರೂಪಾಕ್ಷಲಿಂಗನ ಭಕ್ತನೆಂದರಿದು, ಕೃಷ್ಣಾವಿಷ್ಣುವಿನ ಗುರು ಉಪಮನ್ಯು ಅಹಿಪುರದಲ್ಲಿ ಸೋಮೇಶ್ವರಲಿಂಗನ ಭೃತ್ಯನೆಂಬುದನರಿದು, ಇಂತು ಭೃತ್ಯನ ಶಿಷ್ಯಂಗೆ ಕರ್ತನ ಸರಿಯೆಂಬ ಕರ್ಮಚಂಡಾಲರು ನೀವು ಕೇಳಿಭೋ ! `ಅಸಂಖ್ಯಕೋಟಿಬ್ರಹ್ಮಾಣಾಂ ಕೋಟಿವಿಷ್ಣುಗಣಂ ತತಃ ಗಂಗಾವಾಲುಕ ಸಮೌ ಹೇvõ್ಞ ಕಿಂಚಿದಜ್ಞಾಃ ನ ಮಹೇಶ್ವರಾತ್ ಎಂದು ರುದ್ರನ ಎವೆಯಾಡುವನಿತಕ್ಕೆ ಲೆಕ್ಕವಿಲ್ಲದ ಕೋಟಿ ಬ್ರಹ್ಮವಿಷ್ಣುರು ಸತ್ತುಹೋದರೆಂದು ಓದಿ ತಿಳಿದು ಇಂಥ ಹುಲುದೈವಂಗಳ `ಮೃತ್ಯುಂಜಯಃ ನಿತ್ಯಃ ಏಕೋ ದೇವಃ ನ ದ್ವಿತೀಯಃ' ಎಂದೆನಿಸುವ ಶಿವಗೆ ಸರಿಯಂದೆನಿಸುವ ಭವಿವಿಪ್ರರಿಗೆ ತಾವು ಓದುವ, ವೇದಾಗಮಂಗಳು ತಮಗೆ ಹಗೆಯಾಗಿ ನಡೆಯೊಂದು ಪರಿ ನುಡಿಯೊಂದು ಪರಿ ಆಗಿಹುದು. ಅದೆಂತೆಂದರೆ:ಗೌತಮ ದಧೀಚಿ ಭೃಗುವಾದಿಯಾಗಿ ಹಿರಿಯರುಗಳೇ ಶಾಪದಿಂದ ಶಾಪಹತರಾಗಿ ಶಿವದ್ರೋಹಿಗಳಾಗಿ ನರಕಕ್ಕಿಳಿವ ಚಾಂಡಾಲರಿಂದ ವಿಪ್ರರ ಸತ್ಪಾತ್ರರೆಂದಾರಾಧಿಸುವರ ನರಕದ ಕುಳಿಯೊಳು ಮೆಟ್ಟಿ ನರಕಾಗ್ನಿಯಿಂದ ಸುಡುತಿರ್ಪ ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರ.
--------------
ಉರಿಲಿಂಗಪೆದ್ದಿ
ಆದಿ ಅನಾದಿಯೆಂಬ (ಯೆಂಬುದ?) ಅಂತರಾತ್ಮನಲ್ಲಿ ತಿಳಿಯಲರಿಯದೆ ಆದಿ ದೈವವೆಂದು ಬರಿಯ ಬಹಿರಂಗದ ಬಳಕೆಯನೆ ಬಳಸಿ, ಅನ್ಯ ದೈವಂಗಳನಾರಾಧಿಸಿ ಕೆಡುತ್ತಿಪ್ಪರು ನೋಡಾ. ಅದಕೆ ತಪ್ಪೇನು, ಮಕ್ಕಳಿಗೆ ತಮ್ಮ ಮಾತೆಯೇ ದೈವ. ಮಾತೆಗೆ ತನ್ನ ಪುರುಷನೆ ದೈವ, ಪುರುಷಂಗೆ ತನ್ನ ಪ್ರಭುವೆ ದೈವ. ಪ್ರಭುವಿಗೆ ತನ್ನ ಪ್ರಧಾನನೆ ದೈವ, ಪ್ರಧಾನಂಗೆ ತನ್ನ ರಾಯನೆ ದೈವ. ರಾಯಂಗೆ ತನ್ನ ಲಕ್ಷ್ಮಿಯೆ ದೈವ, ಲಕ್ಷ್ಮಿಗೆ ತನ್ನ ವಿಷ್ಣುವೆ ದೈವ. ವಿಷ್ಣುವಿಗೆ ತನ್ನ ರುದ್ರನೆ ದೈವ, ಆ ರುದ್ರಂಗೆ ತನ್ನ ಈಶ್ವರನೆ ದೈವ. ಈಶ್ವರಂಗೆ ತನ್ನ ಸದಾಶಿವನೆ ದೈವ, ಸದಾಶಿವಂಗೆ ತನ್ನ ಸರ್ವಗತ ಶಿವನೆ ದೈವ. ಸರ್ವಗತ ಶಿವನಿಗೆ ಆಕಾಶಮಹಿಪತಿಯೆಂಬ ಮಹಾಲಿಂಗಕ್ಕೆ ಆದಿ ದೇವರುಳ್ಳಡೆ ಹೇಳಿರೆ, ಇಲ್ಲದಿರ್ದಡೆ ಸುಮ್ಮನೆ ಇರಿರೆ. ಇದು ಕಾರಣ ಷಡುದರುಶನದ ಚರಾಚರಾದಿಗಳೆಲ್ಲರೂ ತಮ ತಮಗಿಷ್ಟ ಕಾಮ್ಯವ ಕೊಡುವುದಕ್ಕೆ ವರವುಳ್ಳ ದೇವರೆಂದು ಬೆರವುತ್ತಿಹರು. ಅದಕ್ಕೆ ತಪ್ಪೇನು ಅವರಿಗಪ್ಪಂಥ, ವರವೀವುದಕ್ಕೆ ಸತ್ಯವುಳ್ಳವನಹುದು. ಆದಡೇನು, ಪ್ರಾಣಕ್ಕೆ ಪರಿಣಾಮವ ಕೊಡಲರಿಯವು. ಅವರ ಕೈಯಲ್ಲಿ ಆರಾಧಿಸಿಕೊಂಬ ದೈವಂಗಳೆಲ್ಲವು. ಪೃಥ್ವಿ ಅಪ್ಪು ತೇಜ ವಾಯು ಆಕಾಶ ಮನವೆಂಬಾರರ ಹಂಗಿನಲ್ಲಿ ಸಿಕ್ಕಿ, ವಿಭೂತಿಯನ್ನಿಟ್ಟು, ರುದ್ರಾಕ್ಷೆಯಂ ತೊಟ್ಟು ಜಪತಪ ಹೋಮ ನೇಮಂಗಳ ಮಾಡಿ ಮಾರಣ ಮೋಹನ ಸ್ತಂಭನ ಉಚ್ಚಾಟನ ಅಂಜನ ಸಿದ್ಧಿ, ಘುಟಿಕಾ ಸಿದ್ಧಿ, ಮಂತ್ರಸಿದ್ಧಿ, ದೂರದೃಷ್ಟಿ ದೂರ ಶ್ರವಣ, ಕಮಲದರ್ಶನ, ತ್ರಿಕಾಲಜ್ಞಾನ, ಪರಕಾಯಪ್ರವೇಶವೆಂಬ ಅಷ್ಟಮಹಾಸಿದ್ಧಿಗಳಂ ಲಿಂಗದಲ್ಲಿ ವರಂಬಡೆದು ತಮ್ಮ ಬೇಡಿದವರಿಗೆ ಕೊಟ್ಟು ತಮ್ಮಿಂದ ಹಿರಿಯರಿಗೆ ನಮಸ್ಕರಿಸಿ, ತಮ್ಮಿಂದ ಕಿರಿಯರಿಗೆ ದೇವರೆಂದು ಬೆರವುತ್ತಿಹರು. ಕಿರಿದುದಿನ ಅವರ ದೇವರೆನ್ನಬಹುದೆ ? ದೇಹಕೇಡಿಗಳ ಸತ್ಯರೆಂದೆನಬಹುದೆ ? ಅಸತ್ಯದಲ್ಲಿ ಅಳಿದವರ ಭಕ್ತರೆಂದೆನಬಹುದೆ ? ಬಹುರೂಪಿನ ಕಪಟಿಗಳ ನಿತ್ಯರೆನಬಹುದೆ ? ದಿನದಿನಕ್ಕೆ ಸತ್ತು ಸತ್ತು ಹುಟ್ಟುವವರ. ಅದೆಂತೆಂದಡೆ: ಬ್ರಹ್ಮನ ಜಾವವೊಂದಕ್ಕೆ ಒಬ್ಬ ಇಂದ್ರನಳಿವ ವಿಷ್ಣುವಿನ ಜಾವವೊಂದಕ್ಕೆ ಒಬ್ಬ ಬ್ರಹ್ಮನಳಿವ ರುದ್ರನ ಜಾವವೊಂದಕ್ಕೆ ಒಬ್ಬ ವಿಷ್ಣುವಳಿವ ಈಶ್ವರನ ಜಾವವೊಂದಕ್ಕೆ ಒಬ್ಬ ರುದ್ರನಳಿವ ಸದಾಶಿವನ ಜಾವವೊಂದಕ್ಕೆ ಒಬ್ಬ ಈಶ್ವರನಳಿವ ಸರ್ವಗತನ ಜಾವವೊಂದಕ್ಕೆ ಒಬ್ಬ ಸದಾಶಿವನಳಿವ ಲಿಂಗ ಶರಣರ ಒಂದು ನಿಮಿಷಕ್ಕೆ ಒಬ್ಬ ಸರ್ವಗತನಳಿವ ಲಿಂಗ ಶರಣರಿಗೆ ಅಳಿವುಳ್ಳಡೆ ಹೇಳಿರೆ ? ಇಲ್ಲದಿರ್ದಡೆ ಸುಮ್ಮನಿರಿರೆ. ಅಂತಪ್ಪ ಮಹಾಲಿಂಗವನು ಶರಣರನು ಅರಿಯದೆ ಷಡುದೇವತೆಗಳು ಮುಖ್ಯವಾದ ಮನು ಮುನಿ ದೇವ ದಾನವ ಮಾನವರೆಲ್ಲರೂ ಆರಿಸಿ ತೊಳಲಿ ಬಳಲುತ್ತಿಪ್ಪರು. ಅದು ಹೇಗೆಂದಡೆ: ಬ್ರಹ್ಮವೇದದಲ್ಲರಸುವನು. ವಿಷ್ಣು ಪೂಜೆಯಲ್ಲರಸುವನು. ರುದ್ರ ಜಪದಲ್ಲರಸುವನು. ಈಶ್ವರ ನಿತ್ಯನೇಮದಲ್ಲರಸುವನು. ಸದಾಶಿವನು ನಿತ್ಯ ಉಪಚಾರದಲ್ಲರಸುವನು. ಸರ್ವಗತ ಶೂನ್ಯದಲ್ಲರಸುವನು. ಗೌರಿ ತಪದಲ್ಲರಸುವಳು, ಗಂಗೆ ಉಗ್ರದಲ್ಲರಸುವಳು. ಚಂದ್ರ ಸೂರ್ಯರು ಹರಿದರಸುವರು. ಇಂದ್ರ ಮೊದಲಾದಷ್ಟದಿಕ್ಪಾಲಕರು ಆಗಮ್ಯದಲ್ಲರಸುವರು ಸಪ್ತ ಮಾತೃಕೆಯರು `ಓಂ ಪಟು ಸ್ವಾಹಾ' ಎಂಬ ಮಂತ್ರದಲ್ಲರಸುವರು. ಸತ್ಯಋಷಿ ದಧೀಚಿ ಗೌತಮ ವಶಿಷ* ವಾಲ್ಮೀಕಿ ಅಗಸ್ತ್ಯ ವಿಶ್ವಾಮಿತ್ರ ಇವರು ಮೊದಲಾದ ಸಪ್ತಋಷಿಯರುಗಳೆಲ್ಲಾ ತಪ, ಯೋಗ, ಆಗಮಂಗಳಲ್ಲಿ ಅರಸುವರು. ಇಂತಿವರೆಲ್ಲರಿಗೆಯೂ ಸಿಕ್ಕಿಯೂ ಸಿಕ್ಕದ ಘನವು ಶುಕ್ಲ ಶೋಣಿತವಿಲ್ಲದ ಕಾಮಿ, ಒಡಲಿಲ್ಲದ ರೂಪು, ತಲೆಯಿಲ್ಲದ ಗಜ, ಬಾಲವಿಲ್ಲದ ಸಿಂಹ, ನಿದ್ರೆಯಿಲ್ಲದ ನಿರಾಳ. ಇಂತೀ ಭೇದಮಂ ಭೇದಿಸಿ ನೋಡಬಲ್ಲಡೆ ಕಣ್ಣ ಮೇಲೆ ಕಣ್ಣುಂಟು. ಮತ್ತಾ ಕಣ್ಣ ತೆರೆದು ಅಮೃತಕಾಯದೃಷ್ಟಿಯಲ್ಲಿ ನೋಡಿದಡೊಂದೂಯಿಲ್ಲ. ನಮ್ಮ ಗುಹೇಶ್ವರ ಲಿಂಗವು ಬಚ್ಚಬರಿಯ ಬಯಲು ನಿಶ್ಚಿಂತ ನಿರಾಳನು
--------------
ಅಲ್ಲಮಪ್ರಭುದೇವರು
ನರಸುರಾದಿಗಳೆಲ್ಲರು ನಿಮ್ಮ ಹೊರೆಯೊಳಗಿದ್ದರು, ಮನು ಮುನಿ ಯತಿ ವ್ರತಿಗಳೆಲ್ಲರು ನಿಮ್ಮ ತೋಹಿನೊಳಗಿದ್ದರು. ಗಂಗೆವಾಳುಕರೆಲ್ಲರು ನಿಮ್ಮ ಮಡಿಯೊಳಗಿದ್ದರು. ಗಂಗೆ ಗೌರೀವಲ್ಲಭರೆಲ್ಲರು, ಚತುರ್ಮುಖ, ಪಂಚಮುಖ, ಷಣ್ಮಖ, ದಶಮುಖರೆಲ್ಲರು ನಿಮ್ಮ ಮಡಿಯ ಗಳಿಗೆಯೊಳಗಿದ್ದರು. ಲೋಕಾದಿ ಲೋಕವೆಲ್ಲವು ನಿಮ್ಮ ಕುಕ್ಷಿಯೊಳಗು. ಕೂಡಲಚೆನ್ನಸಂಗಮದೇವರು ಸಾಕ್ಷಿಯಾಗಿ, ನಿಮ್ಮ ನಿರಾಳದ ಪ್ರಸಾದದಿಂದ ನಿರವಯಲ ಹಾದಿಯ ಕಂಡೆನಲ್ಲದೆ, ನಿಮ್ಮಿಂದಲಾನು ಘನವೆ ಮಡಿವಾಳ ಮಾಚಯ್ಯಾ ?
--------------
ಚನ್ನಬಸವಣ್ಣ
ಗಂಗೆಯ ಮುಳುಗಿ ಬಂದವರೆಲ್ಲಾ ಪಾಪವ ಮಾಡಿ ಸತ್ತಡೆ, ಅವರಿಗೆ ಪುಣ್ಯದ ಪದವಿಯುಂಟಾದಡೆ, ಗಂಗೆ ಘನವೆಂಬೆ, ಮುಳುಗಿ ಪಾಪವ ಮಾಡದೆ ಸತ್ತು ಹೋದಡೆ, ಪುಣ್ಯದ ಪದವಿಯವರಿಗುಂಟಾದಡೆ ಘನವೆಂಬೆ, ಕಪಿಲಸಿದ್ಧಮಲ್ಲಿಕಾರ್ಜುನ.
--------------
ಸಿದ್ಧರಾಮೇಶ್ವರ
ಇನ್ನಷ್ಟು ... -->