ಅಥವಾ

ಒಟ್ಟು 12 ಕಡೆಗಳಲ್ಲಿ , 10 ವಚನಕಾರರು , 12 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಗುರುವಿನೊಡನೆ ಸಹಭೋಜನ ಮಾಡಬೇಕಾದಡೆ, ಚತುರ್ವಿಧಭಕ್ತಿಯಿಂದೆ ಗುರುವಿನೊಳಗೆ ತನುವಡಗಿರಬೇಕು. ಲಿಂಗದೊಡನೆ ಸಹಭೋಜನ ಮಾಡಬೇಕಾದಡೆ, ಸಂಕಲ್ಪ ವಿಕಲ್ಪ ಸೂತಕ ಪಾತಂಕಗಳಳಿದು ಲಿಂಗದೊಳಗೆ ಮನವಡಗಿರಬೇಕು. ಜಂಗಮದೊಡನೆ ಸಹಭೋಜನ ಮಾಡಬೇಕಾದಡೆ, ಮಜ್ಜನ ಭೋಜನ ಕುಸುಮ ಗಂಧಾನುಲೇಪನ ಅನ್ನ ವಸ್ತ್ರ ಮಣಿ ರತ್ನಾಭರಣ ಗೀತ ವಾದ್ಯ ನೃತ್ಯ ಹಾಸುಮಂಚ ಸ್ತ್ರೀಭೋಗ ಮೊದಲಾದ ಅನೇಕ ಭಕ್ತಿಯಿಂದೆ ಜಂಗಮಕ್ಕೆ ಧನವ ಸಮರ್ಪಿಸಬೇಕು. ಇಂತೀ ತ್ರಿವಿಧ ಭಕ್ತಿಯ ನಿರ್ಣಯವನರಿಯದೆ, ತನು ಮನ ಧನಂಗಳ ಹಿಂದಿಟ್ಟುಕೊಂಡು ಮಾತಿನ ಬಣಬೆಯ ಮುಂದಿಟ್ಟುಕೊಂಡು ನೀತಿಹೀನರು ಸಹಭೋಜನ ಕವಳ ಪ್ರಸಾದವ ಕೊಟ್ಟು ಕೊಂಡಡೆ ಹುಳುವಿನ ಕೊಂಡದಲ್ಲಿ ಮುಳುಗಿಸಿಬಿಡುವನು ನೋಡಾ ನಮ್ಮ ಅಖಂಡೇಶ್ವರಾ.
--------------
ಷಣ್ಮುಖಸ್ವಾಮಿ
ಆಕಾಶದ ಮಧ್ಯದಲ್ಲಿ ಒಂದು ಭೇಕ ನುಡಿಯುತ್ತದೆ. ಅದು ಅನೇಕ ಗೀತ ವಾದ್ಯ ನೃತ್ಯಂಗಳಿಂ[ದಾಡುತ್ತಿದ್ದಿತ್ತು]. ಎನ್ನಾಟವ ನೋಡುವರಿಲ್ಲಾಯೆಂದು ನೇತಿಗಳೆಯಿತ್ತು ತನ್ನಂಗವ. ಅದು ನಿರ್ಜಾತನ ಒಲುಮೆ. ಅರ್ಕೇಶ್ವರಲಿಂಗವನರಿವುದಕ್ಕೆ ತೆರಪಾಗಿರಣ್ಣಾ.
--------------
ಮಧುವಯ್ಯ
ಕವಿ ಕವಿಗಳೆಂದು ಹೆಸರಿಟ್ಟುಕೊಂಡು ನುಡಿವ ಅಣ್ಣಗಳಿರಾ ! ಕಾಯದ ಕೀಲನರಿತು ಕವಿತ್ವವನು ಮಾಡುವಂಥ ಭೇದವನು ಬಲ್ಲರೆ ಹೇಳಿ, ಅರಿಯದಿರ್ದರೆ ಕೇಳಿ. ನಿಮ್ಮ ಅಂಗಕಾಯವೆಂಬ ಅಕ್ಷರಕ್ಕೆ `ವಾ' ಎಂಬ ಒತ್ತು ಕೊಟ್ಟು ಇಳಿಯ ತೆಗೆದು ಜನ್ಮದಲ್ಲಿ ನುಡಿಸಬಲ್ಲರೆ ಆತನೀಗ ಪಂಚತತ್ವದ ಮೂಲವ ತಿಳಿದು ಮನವೆಂಬ ಗದ್ದಿಗೆಯ ಅಜ್ಞಾನವೆಂಬ ನಾದಸ್ವರವನು ಹಿಡಿದುಕೊಂಡು ಅದರ ಅನುವರಿತು ಊದಿ, ಪಿಂದೆ ದಾಡೆಯಿಂದ ಪೃಥ್ವಿಯ ಎತ್ತಿದ ಸರ್ಪನ ಎಬ್ಬಿಸಿ ಬ್ರಹ್ಮಾಂಡಕ್ಕೆ ಮುಖ ಮಾಡಿ ನಿಲ್ಲಿಸಬಲ್ಲರೆ ಆತನಿಗಾಗಿ ಗೀತ ಗಾಯನ ವಾದ್ಯ ಪ್ರಾಸ ದೀರ್ಘ ಗುರು ಲಘುಗಳೆಂಬ ಭೇದವ ಬಲ್ಲೆನೆಂದೆನ್ನಬಹುದು. ನಿಮ್ಮ ಅಂಗ ಕಾಯವೆಂಬ ಅಕ್ಷರಕ್ಕೆ `ವಾ' ಎಂಬ ಒತ್ತುಕೊಟ್ಟು ಕಾಣಿರೋ ! ಗುಡಿಸ ಕೊಟ್ಟು, ಗುಡಿಸಿನ ಒಳಗೆ ಸುಳಿದು ಜಿಹ್ವೆಯಲ್ಲಿ ನುಡಿಸಬಲ್ಲರೆ ಅಂತಹವನಿಗೆ ತನ್ನ ತನುವೆಂಬ ಹುತ್ತದ ಒಂಬತ್ತು ಹೆಜ್ಜವನು ಮುಚ್ಚಿದ ದ್ವಾರಂಗಳನ್ನೆಲ್ಲ ಬಳಿದು ಅಂಬರಮಂಟಪದೊಳಗೆ ಸುಳಿದಾಡುವಂಥ ಶಂಭುಲಿಂಗವನು ನೋಡಿಕೊಂಡು ಸಂತೈಸಿ, ವರುಷ ವರುಷಕ್ಕೆ ಒಂದು ಸಂಭ್ರಮದ ಜಾತ್ರೆಯ ನೆರೆಯಬಲ್ಲರೆ ಆತನಿಗೆ ಮಹಾಪ್ರೌಢನೆಂದೆನ್ನಬಹುದು ಕಾಣಿರೋ. ನಿಮ್ಮ ಕಾಯವೆಂಬ ಅಕ್ಷರಕ್ಕೆ `ವಾ' ಎಂಬ ಒತ್ತುಕೊಟ್ಟು, ಕೊಂಬಿನಿಂದಿಳಿಯ ತೆಗೆದು ಆತನಿಗೆ ಆರು ಮೂರುಗಳೆಂಬ ನವರಸವಿದ್ಯ ನಾದವನೆಬ್ಬಿಸುವಂಥ ತಾಳಗತಿಯ ಪದಕಾರಣವ ಬಲ್ಲನೆಂದೆನ್ನಬಹುದು ಕಾಣಿರೋ. ನಿಮ್ಮ ಅಂಗಕಾಯವೆಂಬ ಅಕ್ಷರಕ್ಕೆ `ವಾ' ಎಂಬ ಒತ್ತುಕೊಟ್ಟು ಮೇಲೆತ್ವವಂ ಕೊಟ್ಟು, ಕೆಳಗೈತ್ವವಂ ಕೊಟ್ಟು, ಇವೆರಡನು ಕೂಡಿ ಒಂದಮಾಡಿ ನುಡಿಸಬಲ್ಲರೆ ಆತನಿಗೆ ಸ್ವರ್ಗ ಮತ್ರ್ಯ ಪಾತಾಳ ಇಂತೇಳು ಭುವನ, ಹದಿನಾಲ್ಕು ಲೋಕ, ಸಪ್ತೇಳುಸಾಗರ, ಅಷ್ಟಲಕ್ಷ ಗಿರಿಪರ್ವತಗಳನ್ನೆಲ್ಲ ತನ್ನ ಅಂತರಂಗವೆಂಬ ಕುಕ್ಷಿಯೊಳಗೆ ಇಂಬಿಟ್ಟುಕೊಂಡು ಪರರಿಗೆ ಕಾಣಬಾರದಂತಹ ಕುರೂಪಿಯಾಗಿ ಇರಬಲ್ಲರೆ ಆತನಿಗೆ ಮಹಾಶಿವಜ್ಞಾನಿಯೆಂದೆನ್ನಬಹುದು ಕಾಣಿರೋ. ನಿಮ್ಮ ಅಂಗಕಾಯವೆಂಬ ಅಕ್ಷರಕ್ಕೆ `ವಾ' ಎಂಬ ಒತ್ತುಕೊಟ್ಟು, ಉತ್ವ ಔತ್ವ ಕೊಟ್ಟು, ಉತ್ವ ಔತ್ವವೆರಡನು ಕೂಡಿ ಒಂದುಮಾಡಿ ನಿಲಿಸಿ ಜಮ್ಮೆದಲ್ಲಿ ನುಡಿಸಬಲ್ಲರೆ ಆತನಿಗೆ ಆ ನರಕವಿ ವರಕವಿಗಳ ಕಣ್ಣಿಗೆ ಕಾಣಬಾರದಂತಹ ಮುಸುಕಿನ ಮುಡಿಯಂ ಮಂದಿರ ಮನೆಯೊಳಗೆ ಮುಹೂರ್ತವ ಮಾಡಿಕೊಂಡಿಹುದು. ಓಂಕಾರವೆಂಬುವದೊಂದು ಅಕ್ಷರವ ನೋಡಿ ಅನಂತ ಪರಿಪರಿಯ ವಚನಗಳ ಮಾಡಬಲ್ಲರೆ ಆತನಿಗೆ ಮಹಾ ಉತ್ತಮ ಶಿವಕವೀಶ್ವರನೆಂದೆನ್ನಬಹುದು ಕಾಣಿರೋ. ನಿಮ್ಮ ಅಂಗಕಾಯವೆಂಬ ಅಕ್ಷರಕ್ಕೆ `ವಾ' ಎಂಬ ಒತ್ತುಕೊಟ್ಟು ಒಂದು ಸೊನ್ನೆಯ ಕೊಟ್ಟರೆ `ವಂ' ಎಂದು ಅಂತರಂಗದಲ್ಲಿ ತಿಳಿದು, ಜಿಹ್ವೆಯಲ್ಲಿ ನುಡಿಯಬಲ್ಲರೆ ಆತನಿಗೆ ಕಾಯಪುರವೆಂಬ ಪಟ್ಟಣದೊಳಗೆ ಹರಿದಾಡುವಂಥ ಆರುಮಂದಿ ತಳವಾರರ ತಲೆಯ ಕುಟ್ಟಿ, ಮೂರುಮಂದಿ ಗರ ಬೆರೆದ ನೆಂಟರ ಮೂಗ ಕೊಯ್ದು, ಸಾವಿರೆಸಳಿನ ಕಮಲದೊಳಗೆ ಪೊಕ್ಕು, ತನ್ನ ಸಾವು ಮರಣ ತಪ್ಪಿಸಿಕೊಳ್ಳಬಲ್ಲರೆ ಆತನಿಗೆ ಮಹಾಶಿವಯೋಗೀಶ್ವರನೆಂದೆನ್ನಬಹುದು ಕಾಣಿರೋ. ನಿಮ್ಮ ಅಂಗಕಾಯವೆಂಬ ಅಕ್ಷರಕ್ಕೆ `ವಾ' ಎಂಬ ಒತ್ತುಕೊಟ್ಟು ಎರಡು ಸೊನ್ನೆಯ ಕೊಟ್ಟರೆ `ವಃ' ಎಂದು ಅಂತರಂಗದಲ್ಲಿ ತಿಳಿದು ಜಿಹ್ವೆಯಲ್ಲಿ ನುಡಿಯಬಲ್ಲರೆ, ಆತನಿಗೆ ತನ್ನ ಅಂತರಂಗವೆಂಬ ಹರಿವಾಣದೊಳಗೆ ತುಂಬಿಟ್ಟಿದ್ದಂತಹ ಷಡುರಸ ಪಂಚಾಮೃತ ಪಂಚಕಜ್ಜಾಯಗಳೆಲ್ಲ ಸವಿದುಂಡು ಚಪ್ಪರಿಸಿ ಹಿಪ್ಪೆಯ ಮಾಡಿ ಬೀದಿಯೊಳಗೆ ಬಿಸುಟಬಲ್ಲರೆ ಆತನಿಗೆ ಕಾಯದ ಕೀಲನರಿತು ಕವಿತ್ವವನು ಮಾಡುವಂತಹ ಪ್ರೌಢನೆಂದೆನ್ನಬಹುದು ಕಾಣಿರೋ. ಇಂತೀ ಕಾಯದ ಕೀಲನರಿಯದ ಕವಿಗಳು ಛಂದಸ್ಸು, ನಿಘಂಟು, ಅಮರ, ವ್ಯಾಕರಣ, ನಾನಾರ್ಥಗಳೆಂಬ ಹೆಂಚ ಹೊಡೆದು ನೆತ್ತಿಯ ಮೇಲೆ ಹೊತ್ತುಕೊಂಡು ತಿರುಗುವ ಕವಿಗಳೆಂಬ ಚಾತುರ್ಯದ ಮಾತ ನಿಟ್ಟಿಸಲು ಆಡ ಸವಿವ ಜಾತಿಗಳ ಕಂಡು ನಗುತಿರ್ದಾತ ಸಿದ್ಧಮಲ್ಲನದಾತ ಮೇಗಣಗವಿಯ ಗುರು ಶಿವಸಿದ್ಧೇಶ್ವರಪ್ರಭುವೆ.
--------------
ಸಿದ್ಧಮಲ್ಲಪ್ಪ
[ಎ]ನ್ನಿಷ್ಟಲಿಂಗಕ್ಕೆ ಅಷ್ಟವಿಧಾರ್ಚನೆ ಷೋಡಶೋಪಚಾರಂಗಳ ಮಾಡುವೆನು. ಅವಾವುವಯ್ಯಾ ಎಂದಡೆ; ಜಲಗಂಧಾಕ್ಷತಂ ಚೈವ ಪುಷ್ಪಂ ಚ ಧೂಪದೀಪಯೋ ನೈವೇದ್ಯಂ ಚೈವ ತಾಂಬೂಲಂ ಯಥೇಚ್ಛಾಷ್ಟವಿಧಾರ್ಚನಂ ಇನ್ನು ಷೋಡಶೋಪಚಾರಗಳು; ಸುಖತಲ್ಪಂ ಸುವಸ್ತ್ರಂ ಚ ಆಭರಣಾನುಲೇಪನಂ ಛತ್ರಚಾಮರವ್ಯಜನಂ ದರ್ಪಣಂ ನಾದವಾದ್ಯಯೋ ನೃತ್ಯಂ ಗೀತಂ ತಥಾ ಸ್ತೋತ್ರಂ ಪುಷ್ಪಾಂಜಲೀ ಪ್ರಣಾಮಕಂ ಪ್ರದಕ್ಷಿಣಂ ಚ ಮೇ ಯಕ್ತಂ ಷೋಡಶಂ ಚೋಪಚಾರಕಂ ಈ ಕ್ರಮವಿಡಿದು ಇಷ್ಟಲಿಂಗಾರ್ಚನೆಯ ಮಾಡಿ ನಿಮ್ಮಲ್ಲಿ ಕೂಡುವೆನು, ಕೂಡಲಸಂಗಮದೇವಾ.
--------------
ಬಸವಣ್ಣ
ಗ್ರಂಥ: ಅಘ್ರ್ಯಂ ಪಾದ್ಯಂ ತಥಾಚಮ್ಯಂ ಸ್ನಾನಂ ಪಂಚಾಮೃತಾದಿಭಿಃ ದರ್ಪಣಂ ಧೂಪದೀಪಂ ಚ ಚಾಮರಂ ಆತಪತ್ರಕಂ ಗೀತಂ ವಾದ್ಯಂ ತಥಾ ನೃತ್ಯಂ ನಮಸ್ಕಾರಂ ಜಪಂ ತಥಾ ಪ್ರದಕ್ಷಿಣಂ ಕ್ರಮೇಣೋಕ್ತಂ ಷೋಡಶಸ್ಯೋಪಚಾರಕಂ ಗಂಧಾಕ್ಷತಂ ಚ ಪುಷ್ಪಂ ಚ ವಸ್ತ್ರಾಭರಣಾನುಲೇಪನಂ ನೈವೇದ್ಯಂ ಚ ತಾಂಬೂಲಂ ಅರ್ಚನಂ ಚಾಷ್ಟಮಂ ಭವೇತ್ _ಇಂತು ಅಷ್ಟವಿಧಾರ್ಚನೆ ಷೋಡಶೋಪಚಾರವು. ಗುರುವಿಂಗೆ ತನು, ಲಿಂಗಕ್ಕೆ ಮನ, ಜಂಗಮಕ್ಕೆ ಧನ ಮುಂತಾಗಿ ಮಾಡುವುದು. ಭಕ್ತಿ ಜ್ಞಾನ ವೈರಾಗ್ಯವಿದೆಂದರಿಯಲು ಮೋಕ್ಷ ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರಾ.
--------------
ಉರಿಲಿಂಗಪೆದ್ದಿ
ವೇದವನೋದಿ ಕೇಳಿ ವೇದದ ವರ್ಮವನರಿದ ಫಲ ದಾಸೋಹವಯ್ಯಾ. ಶಾಸ್ತ್ರವನೋದಿ ಕೇಳಿ ಶಾಸ್ತ್ರದ ವರ್ಮವನರಿದ ಫಲ ದಾಸೋಹವಯ್ಯಾ. ಪುರಾಣವನೋದಿ ಕೇಳಿ ಪುರಾಣದ ವರ್ಮವನರಿದ ಫಲ ದಾಸೋಹವಯ್ಯಾ. ಆಗಮವನೋದಿ ಕೇಳಿ ಆಗಮದ ವರ್ಮವನರಿದ ಫಲ ದಾಸೋಹವಯ್ಯಾ. ಪುರಾತನರ ಗೀತ ವಚನ ಪ್ರಸಂಗಾನುಭವದಲ್ಲಿ ದೃಷ್ಟಫಲ ದಾಸೋಹವಯ್ಯಾ. ವೇದಶಾಸ್ತ್ರ ಪುರಾಣ ಆಗಮ ಪುರಾತನರ ಗೀತದ ವಚನ ಪ್ರಸಂಗವನರಿದು ದಾಸೋಹವಿಲ್ಲದಿದ್ದಡೆ ಆ ಓದು ಗಿಳಿ ಓದಿದಂತೆ. ಆ ಕೇಳುವೆ, ಮರುಳ ಕೇಳುವೆಯಂತೆ. ಅವನೇತಕ್ಕೂ ಬಾರ್ತೆಯಲ್ಲಯ್ಯಾ, ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರ.
--------------
ಉರಿಲಿಂಗಪೆದ್ದಿ
ಮಹಾಜ್ಞಾನ ಗುರುವಿನಲ್ಲಿ ಸ್ವಾಯತವಾಯಿತ್ತು, ಸುಜ್ಞಾನ ಶಿಷ್ಯನಲ್ಲಿ ಸ್ವಾಯತವಾಯಿತ್ತು; ಜ್ಞಾನ ಲಿಂಗದಲ್ಲಿ ಸ್ವಾಯತವಾಯಿತ್ತು.- ಇಂತು ಜ್ಞಾನ ಸುಜ್ಞಾನ ಮಹಾಜ್ಞಾನವೆಂಬವು, ಜಂಗಮ ಲಿಂಗದಲ್ಲಿ ಸ್ವಾಯತವಾಗಿಪ್ಪುವಾಗಿ! - ಅದು ಕಾರಣ, ಲಿಂಗಕ್ಕೆ ಮಜ್ಜನಕ್ಕೆರೆಯಲಾಗದು; ಅದೇನು ಕಾರಣವೆಂದಡೆ- ಗಮನಿಸಿ ಬಂದ ಜಂಗಮಲಿಂಗವು ಪಾದಾರ್ಚನೆಯ ಮಾಡಿ[ಕೊಂಬು]ದಾಗಿ. ಲಿಂಗಕ್ಕೆ ವಸ್ತ್ರವ ಕೊಡಲಾಗದು, ಅದೇನು ಕಾರಣವೆಂದಡೆ- ಚರವೆಂಬ ಜಂಗಮಲಿಂಗವು ವಸ್ತ್ರಾಲಂಕಾರವ ಮಾಡಿಕೊಳ್ಳ[ಬಲ್ಲು]ದಾಗಿ. ಲಿಂಗಕ್ಕೆ ಗಂಧವ ಪೂಸಲಾಗದು, ಅದೇನು ಕಾರಣವೆಂದಡೆ- ಚರವೆಂಬ ಜಂಗಮಲಿಂಗವು ಗಂಧವ ಲೇಪಿಸಿಕೊಳ್ಳ[ಬಲ್ಲು]ದಾಗಿ ಲಿಂಗಕ್ಕೆ ಅಕ್ಷತೆಯ ಕೊಡಲಾಗದು, ಅದೇನು ಕಾರಣವೆಂದಡೆ- ಚರವೆಂಬ ಜಂಗಮವು ಲಲಾಟದಲ್ಲಿ ಧರಿಸಿಕೊಳ್ಳ[ಬಲ್ಲು]ದಾಗಿ. ಲಿಂಗಕ್ಕೆ ಪುಷ್ಪವ ಕೊಡಲಾಗದು, ಅದೇನು ಕಾರಣವೆಂದಡೆ - ಚರವೆಂಬ ಜಂಗಮಲಿಂಗವು, ತಮ್ಮ ಸಿರಿಮುಡಿಯಲ್ಲಿ ತುರುಬಿಕೊಳ್ಳ[ಬಲ್ಲು]ದಾಗಿ. ಲಿಂಗಕ್ಕೆ ಧೂಪಾರತಿಯ ಕೊಡಲಾಗದು, ಅದೇನು ಕಾರಣವೆಂದಡೆ- ಚರವೆಂಬ ಜಂಗಮಲಿಂಗವು, ನಾಸಿಕದಲ್ಲಿ ಪರಮಳವ ಕೊಳ್ಳ[ಬಲ್ಲು]ದಾಗಿ. ಲಿಂಗಕ್ಕೆ ದೀಪಾರತಿಯ ಬೆಳಗಲಾಗದು, ಅದೇನು ಕಾರಣವೆಂದಡೆ - ಚರವೆಂಬ ಜಂಗಮಲಿಂಗವು, ದೃಷ್ಟಿಯಲ್ಲಿ ನೋಡಿ ಪರಿಣಾಮಿಸ[ಬಲ್ಲು]ದಾಗಿ. ಲಿಂಗಕ್ಕೆ ನೈವೇದ್ಯವ ಕೊಡಲಾಗದು, ಅದೇನು ಕಾರಣವೆಂದಡೆ - ಚರವೆಂಬ ಜಂಗಮಲಿಂಗವು ಜಿಹ್ವೆಯಲ್ಲಿ ಸಕಲರುಚಿಗಳ ರುಚಿಸ[ಬಲ್ಲು]ದಾಗಿ. ಲಿಂಗಕ್ಕೆ ಹಸ್ತಮಜ್ಜನಕ್ಕೆ ಸಿತಾಳವ ನೀಡಲಾಗದು, ಅದೇನು ಕಾರಣವೆಂದಡೆ- ಚರವೆಂಬ ಜಂಗಮಲಿಂಗವು, ಹಸ್ತಮಜ್ಜನವ ಮಾಡಿಕೊಳ್ಳ[ಬಲ್ಲು]ದಾಗಿ. ಲಿಂಗಕ್ಕೆ ತಾಂಬೂಲವನರ್ಪಿಸಲಾಗದು, ಅದೇನು ಕಾರಣವೆಂದಡೆ- ಚರವೆಂಬ ಜಂಗಮಲಿಂಗವು, ಶ್ರೀಮುಖದಲ್ಲಿ ತಾಂಬೂಲವನರ್ಪಿಸಿಕೊಳ್ಳ[ಬಲ್ಲು]ದಾಗಿ. ಲಿಂಗಕ್ಕೆ ಸುಖಾಸನವನಿಕ್ಕಲಾಗದು, ಅದೇನು ಕಾರಣವೆಂದಡೆ- ಚರವೆಂಬ ಜಂಗಮಲಿಂಗವು ಸುಖಾಸನದಲ್ಲಿ ಕುಳ್ಳಿರ[ಬಲ್ಲು]ದಾಗಿ. ಲಿಂಗಕ್ಕೆ ಸ್ತೋತ್ರ, ಮಂತ್ರ, ಗೀತ, ವಾದ್ಯ, ನೃತ್ಯಂಗಳನಾಗಿಸಲಾಗದು, ಅದೇನು ಕಾರಣವೆಂದಡೆ- ಚರವೆಂಬ ಜಂಗಮಲಿಂಗವು ನೇತ್ರ ಶ್ರೋತ್ರ ಹಸ್ತಂಗಳಿಂದ ಸ್ತೋತ್ರ ಮಂತ್ರ ವಾದ್ಯ ನೃತ್ಯಂಗಳ ಕೇಳಿ ನೋಡಿ ತಣಿದು ಪರಿಣಾಮಿಸ[ಬಲ್ಲು]ದಾಗಿ. ಲಿಂಗಕ್ಕೆ ಭೂಷಣಲಂಕಾರವ ಮಾಡಲಾಗದು, ಅದೇನು ಕಾರಣವೆಂದಡೆ- ಚರವೆಂಬ ಜಂಗಮಲಿಂಗವು ಕರ ಶಿರ ಚರಣಾದ್ಯವಯವಂಗಳಲ್ಲಿ ಆಭರಣಂಗಳನಲಂಕರಿಸ[ಬಲ್ಲು]ದಾಗಿ. ಲಿಂಗಕ್ಕೆ ವಾಹನಂಗಳನರ್ಪಿಸಲಾಗದು, ಅದೇನು ಕಾರಣವೆಂದಡೆ- ಚರವೆಂಬ ಜಂಗಮಲಿಂಗವು ವಾಹನಂಗಳ ಮೇಲೆ ಕುಳಿತು ಚಲಿಸ[ಬಲ್ಲು]ದಾಗಿ. ಇಂತೀ ಹದಿನಾರು ತೆರದ ಭಕ್ತಿಯನು ಚರಲಿಂಗವೆಂಬ ಜಂಗಮಲಿಂಗಕ್ಕೆ ದಾಸೋಹವ ಮಾಡಿ ಪ್ರಸಾದವ ಕೊಂಬ ಭಕ್ತಂಗೆ ಗುರುವುಂಟು, ಲಿಂಗವುಂಟು ಜಂಗಮವುಂಟು, ಪಾದೋದಕ ಪ್ರಸಾದವುಂಟು. ಆಚಾರವುಂಟು ಸದ್ಭಕ್ತಿಯುಂಟು. ಇಂತೀ ಎಲ್ಲವನು ಜಂಗಮಕ್ಕೆ ದಾಸೋಹವ ಮಾಡದೆ ತನ್ನ ಗುರುವಿಗೂ ಲಿಂಗಕ್ಕೂ ಆರು ಕೆಲಂಬರು ಭಕ್ತಿಯ ಮಾಡುವರು ಅವರಿಗೆ ಗುರುವಿಲ್ಲ ಲಿಂಗವಿಲ್ಲ ಜಂಗಮವಿಲ್ಲ ಪಾದೋದಕ ಪ್ರಸಾದವಿಲ್ಲ. ಇಂತೀ ಪಂಚಾಚಾರವಿಲ್ಲವಾಗಿ ಅವರು ವ್ರತಗೇಡಿಗಳು. ಅವರ ಮುಖವ ನೋಡಲಾಗದು, ಕೂಡಲಚೆನ್ನಸಂಗಮದೇವಾ.
--------------
ಚನ್ನಬಸವಣ್ಣ
ರೂಪಾದ ಮೇಲೆ ನಿರೂಪವಿಲ್ಲಾ, ನಿರೂಪಾದ ಮೇಲೆ ರೂಪವಿಲ್ಲಾ. ತಾನೇ ರೂಪಾಯಿತ್ತು, ತಾನೇ ನಿರೂಪವಾಯಿತ್ತು. ಬೇಕಾದರೆ ಬಂತು, ಸಾಕಾದರೆ ಹೋಯ್ತು. ತಾ ಬಂದು ಹೋಗುವದರೊಳಗೆ ಶಿವಬ್ಯಾರೆ, ಜಗಬ್ಯಾರೆ, ನರರು ಬ್ಯಾರೆ, ಸುರರು ಬ್ಯಾರೆ, ಇಹಬ್ಯಾರೆ, ಪರಬ್ಯಾರೆ, ಪುಣ್ಯ ಬ್ಯಾರೆ, ಪಾಪ ಬ್ಯಾರೆ, ಸುಖ ಬ್ಯಾರೆ ದುಃಖ ಬ್ಯಾರೆ, ಈ ಸರ್ವವು ಬ್ಯಾರೆ ಬ್ಯಾರೆಯಾಗಿ ತೋರುವ ತನ್ಮ ವಿನೋದ, ತನ್ನಾಟ, ತಾನೆಂದರೇನು ? ಮಾಯೆ. ಮಾಯೆಯೆಂದರೇನು ? ನಿರ್ಮಾಯೆ. ನಿರ್ಮಾಯೆ ಎಂದರೆ ಬಂತ್ಹಾ ್ಯಂಗೆ, ಹೋಯಿತ್ಹಾ ್ಯಂಗೆ ? ಹುಟ್ಟಿತ್ಹಾ ್ಯಂಗೆ ? ಬೆಳೀತ್ಹಾ ್ಯಂಗೆ ಸತ್ತಿತ್ಹ್ಯಾಂಗೆ ಮಹಾಂತಯೋಗಿ ? ಹೋಗೋದಲ್ಲಾ ನಿರ್ಮಾಯ ನಿರ್ವಯಲಾದ ಮ್ಯಾಲೆ ಬರುವದಲ್ಲ, ಅಲ್ಲಂದರೇನು ಬಂತು ? ಏನು ಬಂತೆಂದರೇನು ಹೋಯಿತು ? ಹೋಗೋದೇನು ? ಬರೋದೇನು ? ಬರೋದಿಲ್ಲಾ ಹೋಗೋದಿಲ್ಲಾ. ಏನೂ ಇಲ್ಲಾ, ಎಂತೂ ಇಲ್ಲಾ, ಸುಮ್ಮನೆ ಪರಬ್ರಹ್ಮ, ಪರಬ್ರಹ್ಮೆಂಬೋ ನಾಮವುಂಟೆ ? ಆ ಪರಬ್ರಹ್ಮ ಎಲ್ಲಿಯಿತ್ತು ? ಪರಬ್ರಹ್ಮ ತಾನಾಗುವುದಕ್ಕೆ ಮೊದಲೇ ಏನೆಂಬೋ ನಾಮವುಂಟು ? ಚಿತ್ತೆಲ್ಲಿತ್ತು ? ಪ್ರಾಣೆಲ್ಲಿತ್ತು ? ಭಾವೆಲ್ಲಿತ್ತು ? ಚಿತ್ತ ಚಿತ್ತಾಗುವದು, ಆ ಚಿತ್ತ ಪಟ್ಟಾಗುವದು. ಇದರೊಳಗ ಭಾವೇನು ಜೀವೇನು ? ಸಾವೇನು ನೋವೇನು ? ಈ ಮಾಯೆಯ ಬೆಡಗಿನ ಹೆಸರು ಮಹಾಂತ. ಈ ಮಾಯೆ ತಾನೆ ನಿರ್ಮಾಯೆ ಆದರೆ ಸಾವು ಇಲ್ಲಾ ಗೀವು ಇಲ್ಲಾ, ಬ್ರಹ್ಮಾಂಡವಿಲ್ಲಾ ಪಿಂಡಾಂಡವಿಲ್ಲಾ, ನಾನೂ ಇಲ್ಲಾ ನೀನೂ ಇಲ್ಲಾ, ಶಿವನು ಇಲ್ಲಾ ಗಿವನು ಇಲ್ಲಾ. ಮುಕ್ತಿ ಇಲ್ಲಾ ಗಿಕ್ತಿ ಇಲ್ಲಾ, ಮಾಂತ ಇಲ್ಲಾ ಗೀಂತ ಇಲ್ಲಾ. ಇಲ್ಲಗಿಲ್ಲ ಸುಳ್ಳೆ ಸುಳ್ಳೆ ಸುಳ್ಳೇನೋ ನಿರುಪಮ ನಿರಾಳ ಮಹತ್ಪ್ರಭು ಮಹಾಂತಯೋಗಿ.
--------------
ಮಡಿವಾಳಪ್ಪ / ಕಡಕೋಳ ಮಡಿವಾಳಪ್ಪ
ಇಷ್ಟಲಿಂಗಕ್ಕೆ ಅಂಗದಲ್ಲಿಯೆ ಮಜ್ಜನ, ಲಲಾಟದಲ್ಲಿಯೆ ಗಂಧಾಕ್ಷತೆ. ತುರುಬಿದ ಪುಷ್ಪಚಯವೆ ಲಿಂಗಕ್ಕೆ ಪೂಜೆ. ಜಿಹ್ವೆ ಸೋಂಕಿದ ಷಡುರಸಾನ್ನವೆ ಲಿಂಗಕ್ಕೆ ನೈವೇದ್ಯ. ತಾಂಬೂಲ ಸವಿಹವೆ ಲಿಂಗಕ್ಕೆ ವೀಳೆಯ. ಅಂಗಚ್ಛಾದನವಸ್ತ್ರವೆ ಲಿಂಗಕ್ಕೆ ವಸ್ತ್ರ, ಕಂಡು ಕೇಳಿದ ಗೀತ ವಾದ್ಯ ನೃತ್ಯಾದಿಗಳೆ ಲಿಂಗದ ಕೇಳಿಕೆ ಇಂತೀ ಅಂಗದಲ್ಲಿ ಇಷ್ಟಲಿಂಗಪೂಜೆಯ ಮಾಡುವ ಲಿಂಗಸಂಪನ್ನರ ತೋರಾ ಗುಹೇಶ್ವರಾ.
--------------
ಅಲ್ಲಮಪ್ರಭುದೇವರು
ಗೀತ ಪಾತ್ರ ಬೈರೂಪ ಸೂಳೆ ಡೊಂಬಿತಿ ತಾಳದಂಡಿಗಿ ಸೂಕ (?)ವೈಶಿಕದ ಆಳಾಪಕ್ಕೆ ಮರುಳಾಗಿ ತಲೆದೂಗುತಿರ್ಪರು, ಸರ್ಪನು ಸ್ವರವನು ತಾ ಕೇಳಿದಂತೆ. ಗೋಕ್ಷತ್ರಿಯಧಿಪ ಕಾಕ ಪುರಾಣ (?) ಪರಧನ ಪರಸತಿ ಗೌತಮ ದುರ್ಯೋಧನ ಕೀಚಕ ರಾವಳ ಮೊದಲಾಗಿ ಸತ್ತುಹೋದವರ ಸಂಗತಿಯ ಕೇಳಿದಡೆ, ಕೆಟ್ಟ ಮೈ ಸುವರ್ಣವಾಯಿತೆಂಬ ಭ್ರಷ್ಟನಾಯಿನುಡಿಯ ಕೇಳಿ ಕೃತಾರ್ಥರಾದೆವೆಂಬ ಮತಿಗೇಡಿ ನಾಯಿಗಳಿಗೆ ಶಿವಗತಿ, ಧರ್ಮಮಾರ್ಗ ಹೇಳಿದವರಿಗೆ ಸತ್ತ ಹೆಣದ ಮುಂದೆ ಪಂಚಮಹಾವಾದ್ಯವ ಬಾರಿಸಿದ ತೆರನಂತಾಯಿತ್ತು, ಕಲಿದೇವರದೇವಯ್ಯಾ
--------------
ಮಡಿವಾಳ ಮಾಚಿದೇವ
ಅಷ್ಟವಿಧಾರ್ಚನೆ ಷೋಡಶೋಪಚಾರವು ಮನದೊಳಗೆ ಮಾಡುವ ಲಿಂಗಾಂಗಿಯ ನೋಡಿ. ಆತನ ಸಮತೆ ಸಜ್ಜನವೆ ಸಮ್ಮಾರ್ಜನೆ, ಅಂತರಂಗದ ಶುದ್ಧವೆ ರಂಗವಾಲಿ, ಮನವ ನಿಲಿಸಿದ್ದೆ ಮಜ್ಜನ, ತನುವ ಮರ್ದಿಸಿದ್ದೆ ಗಂಧ, ಅಹಂಕಾರವಳಿದುದೆ ಅಕ್ಷತೆ, ಪೂರ್ವವಳಿದುದೆ ಪುಷ್ಪ, ಪ್ರಪಂಚನಳಿದುದೆ ಪತ್ರೆ, ದುರ್ಗುಣವಳಿದುದೆ ಧೂಪ, ಸುಗುಣವುಳಿದುದೆ ದೀಪ, ಅಷ್ಟಮದವಳಿದುದೆ ಆರೋಗಣೆ, ಅರಿಷಡುವರ್ಗವನಳಿದುದೆ ಆ ಹಸ್ತಕ್ಕೆ ಅಗ್ಘಣೆ, ವಿಷಯವಿಕಾರವನಳಿದುದೆ ಕರ್ಪುರ ವೀಳ್ಯ, ಸಪ್ತವ್ಯಸನವನಳಿದುದೆ ಆ ಸಹಭೋಜನ, ದಶವಾಯುವ ದೆಸೆಗೆಡಿಸಿದುದೆ ದಾನ -ಧರ್ಮ, ಹಸಿವು ತೃಷೆ ನಿದ್ರೆ ನೀರಡಿಕೆ ಜಾಡ್ಯ ಸ್ತ್ರೀಸಂಯೋಗ ಕಳವಳವಿಲ್ಲದಿದ್ದುದೆ ಜಪತಪ. ಪಂಚೇಂದ್ರಿಯ ಪ್ರಪಂಚು ಹೊದ್ದದಿದ್ದುದೆ ಪಂಚಮಹಾವಾದ್ಯ, ಪ್ರಕೃತಿ ಪಲ್ಲಟವಾದುದೆ ಪಾತ್ರಭೋಗ, ಗೀತ ಪ್ರಬಂಧ ಕರಣವೆ ಸಿಂಹಾಸನ ಏರುವ ಸುಖ, ವ್ಯಸನ ಚಂಚಲತೆಯನಳಿದುದೆ ಛತ್ರಚಾಮರ, ಶೀರ್ಷಶಿವಾಲ್ಯದೊಳಿಪ್ಪ ಪರಮಗುರು ಪರಂಜ್ಯೋತಿ ಪರಶಿವ ಪರಕ್ಕೆ ಪರವಾದ ಶ್ರೀ ಪಟ್ಟುಕಂಥೆಯ ಚೆನ್ನಬಸವೇಶ್ವರದೇವರ ಶ್ರೀಪಾದಾಂಗುಲಿಗೆ ಈ ವಚನವ, ಪುಣ್ಯಪುಷ್ಪವಮಾಡಿ ಅರ್ಪಿಸುವ ಕುಷ್ಟಗಿಯ ನಿರ್ವಾಣ ಕರಿಬಸವರಾಜದೇವರು ಅಖಂಡ ಪರಿಪೂರ್ಣ ಘನಲಿಂಗಗುರು ಚೆನ್ನಬಸವೇಶ್ವರ ಶಿವಸಾಕ್ಷಿಯಾಗಿ.
--------------
ಕುಷ್ಟಗಿ ಕರಿಬಸವೇಶ್ವರ
ಜ್ಞಾನಗುರುವಿನ ಶ್ರೀಪಾದವಿಡಿದ ಶಿವಕವಿ ಅತೀತನೆಂತೆನೆ : ``ಪರಬ್ರಹ್ಮಸ್ವರೂಪ ಉತ್ತಮಂ ಮುಕ್ತಿ ಸಂತತಃ ದೇವದೂತಿ ಪ್ರಸನ್ನಿತೆ ಉಭಯಮಾರ್ಗ ವರಕವಿ ಮುದಿಮಮ್ ಪ್ರಳಯಕಾಲಸ್ಯ | ಆತ್ಮತೃಪ್ತಿ ನರಕವಿ ರಾಜವಂದಿತಾ ತನ್ನಿಷ್ಟ ನರಕಪಿತಃ ತ್ರಿವಿಧ ಶಬ್ದ ಶಾಸ್ತ್ರಯಿತಾರ್ಥ ಸಮೋದ್ದಿಷ್ಟ ವಚನಧಾರಿ ನಿಷ್ಕಳಂ ||''(?) ಶ್ರೀ ಶ್ರೀ ಕವಿಗಳೆಂದು ಪೆಸರಿಟ್ಟುಕೊಂಡು ನುಡಿವಣ್ಣಗಳಿರಾ ಕಾಯದ ಕೀಲನರಿತು ಕಾವ್ಯತ್ವವನು ಮಾಡಿ ಭೇದವ ಬಲ್ಲರೆ ಹೇಳಿ, ಅರಿಯದಿರ್ದೊಡೆ ಕೇಳಿ. ನಿಮ್ಮ ಅಂಗ ಪಾತಾಳವೆಂಬ ಪವನಸೂತ್ರವನು ಮೆಟ್ಟಿ ಬಿಡುವಿಲ್ಲದಂತಾ ಉಯ್ಯಾಲೆಯನಾಡುತಿಹುದು. ನಿಮ್ಮ ಅಂಗ ಭುವಿಯೆಂಬ ಭೂಚಕ್ರದ ಮೂಲ ತಿಳಿದು ನಾಭಿಮಂಡಲವೆಂಬ ಹುತ್ತದೊಳಗಿರ್ದ ನಾಗಕೂರ್ಮನೆಂಬ ಘಟಸರ್ಪನ ತಲೆಕೆಳಗಾಗಿ ಬಾಲ ಮೇಲಕಾಗಿರುವುದು ಕಾಣಿರೋ. ಯೋಗದೃಷ್ಟಿಯೆಂಬ ನಾಗೇಶ್ವರನನು ಹಿಡಿದುಕೊಂಡು ಊದಲಾಗಿ ಆಗ ನಾಗಕೂರ್ಮನೆಂಬ ಸರ್ಪ ಸಭೆಯನು ತಿಳಿಯಲಿಕ್ಕೆ ಇಳುಹಿ ತಲೆಯ ಮೇಲಕ್ಕೆ ಮಾಡಿ ಗಗನಾಕಾರವೆಂಬ ಮಂಡಲಕ್ಕೆ ಹೆಡೆಯೆತ್ತಿ ಆರ್ಭಟಿಸಿ ಝೇಂಕರಿಸಿ ನಲಿದಾಡುವಂತೆ, ನಾದವನು ತನ್ನಲ್ಲಿ ಜ್ಞಾನೋದಯದಿಂದ ಲಾಲಿಸಿ ಕೇಳಬಲ್ಲರೆ ಆತನಿಗೆ ಝೇಂಕಾರ ಮೊದಲಾದ ನಾಲ್ಕು ವೇದ, ಆರು ಶಾಸ್ತ್ರ, ಹದಿನೆಂಟು ಪುರಾಣ ಇಪ್ಪತ್ತೆಂಟು ದಿವ್ಯಾಗಮ, ಮೂವತ್ತೆರಡು ಉಪಶಾಸ್ತ್ರಂಗಳಲ್ಲಿ ಗೀತ ಗಾಯನ ಯತಿ ಪ್ರಾಸ ದೀರ್ಘ ಗುರು ಲಘು ಬತ್ತೀಸ ರಾಗವನು ಎತ್ತಿ ಹಾಡುವಂತ ಮೂಲದ ಕೀಲ ಬಲ್ಲನೆಂದೆನ್ನಬಹುದು ಕಾಣಿರೋ. ನಿಮ್ಮ ಅಂಗ ಪಂಚಶತಕೋಟಿ ಭುವನದಲ್ಲಿ ಚಲಿಸ್ಯಾಡುವಂಥ ಮನದ ಚಂಚಲವೆಂಬ ಪಕ್ಷಿಯ ಪಕ್ಕವನು ಹರಿದು, ತನುವೆಂಬ ಪಂಜರದೊಳಗೆ ಇಂಬಿಟ್ಟುಕೊಂಡು, ತಾಮಸ ಮದಗುಣಾದಿಗಳೆಂಬ ಹುಳುಗಳ ಜಾತಿಗಳ ತೂಗಡಿಕೆ ಮದನಿದ್ರೆ ವಾಹಡಿಕೆ ಆಕಳಿಕೆ ಸೀನು ಬಿಕ್ಕಳಿಕೆ ಬದಗರ ತೇಗು ಮೊದಲಾದ ತಾಮಸಗುಣಾದಿ ಗುಣಂಗಳೆಂಬ ಹುಳುಜಾತಿಗಳನ್ನೆಲ್ಲ ತಿಂದು ನುಂಗಿ ನಿರ್ಮಲ ದೇಹಿಯಾಗಿರಬಲ್ಲರೆ ಆತನಿಗೆ ಒಂ ನಮಃಶಿವಾಯ ಎಂಬ ಷಡಕ್ಷರದ ಭೇದವ ಬಲ್ಲನೆಂದೆನ್ನಬಹುದು ಕಾಣಿರೋ. ನಿಮಗೆ ಅಷ್ಟದಿಕ್ಕಿನಲ್ಲಿ ಆಡುವಂಥ ದಶರೂಪಗಳನ್ನೆಲ್ಲ ಚಿತ್ತ ಏಕ ಮಾಡಿ, ಸುಜ್ಞಾನವೆಂಬ ಹಸ್ತದಲ್ಲಿ ಹಿಡಿದು, ಮುಖದ ಮೇಲುಗಿರಿಮಂದರಪರ್ವತದ ಶಿಖರದ ತುದಿಯಲ್ಲಿ ನಿಲ್ಲಿಸಿ, ಕ್ಷೀರಸಾಗರವೆಂಬ ಸಮುದ್ರದೊಳಗೆ ಹುಚ್ಚೆದ್ದು ಸೂಸಿ ಆಡುವಂಥ ತೆರೆಗಳನ್ನೆಲ್ಲ ನಿಲ್ಲಿಸಬಲ್ಲರೆ ಆತನಿಗದು ತ್ರಿಕಾಲ ಮರಣಾದಿಗಳನ್ನೆಲ್ಲ ಗೆಲಿಯಬಲ್ಲಂಥ ಮಹಾಶಿವಯೋಗೀಶ್ವರನೆಂದೆನ್ನಬಹುದು ಕಾಣಿರೋ. ಆತನಿಗೆ ಜ್ಞಾನ ಅರ್ಥ ಪದದ ಕೀಲ ವಚನಂಗಳ ಅರ್ಥ ಅನುಭಾವಂಗಳ ಮಾಡಬಲ್ಲನೆಂದೆನ್ನಬಹುದು ಕಾಣಿರೋ ! ಇಂತು ಮಂತ್ರದ ಕೀಲನರಿಯದ ಕವಿಗಳು ಕಂದಯ್ಯಗೆ ಮಹಾಪ್ರಭುಲಿಂಗಲೀಲೆ, ಕರಣಹಸಿಗೆ, ಮಿಶ್ರಾರ್ಪಣ, ನವಚಕ್ರಕೋಟಿಗಳೆಂಬ ಇಂತೀ ಭುವಿಯಲ್ಲಿ ಶಿವಾಗಮವೆಂದು ಬರಿಯ ಮಾತಿನ ಮತಿಯ ಪತ್ರವನು ಹಿಡಕೊಂಡು ಓದಿ, ಅದರೊಳಗಿನ ಅರ್ಥವನು ಭಾವಂಗಳಲಿ ತಿಳಿತಿಳಿದು ನೋಡಿ, ಜ್ಞಾತತ್ವದ ವಚನಂಗಳ ಮಾಡಿ ಇಡುವಂಥ ಕವಿಗಳು ತಮ್ಮ ಆತ್ಮದ ಶುದ್ಧಿಯ ತಾವರಿಯದೆ ಭೂತವೊಡೆದವರು ಬೊಗಳಾಡಿದಂತೆ ಆಯಿತ್ತು ಕಾಣಿರೋ. ಅದೆಂತೆಂದರೆ :ಛಂದಸ್ಸು, ನಿಘಂಟು, ಅಮರ, ವ್ಯಾಕರಣ, ನಾನಾರ್ಥಗಳೆಂಬ ಹಂಚಿನ ಕುಡಿಕೆಯೊಳಗೆ ತುಂಬಿದ ಅರ್ಥ ಅನುಭಾವಂಗಳ ತಿಳಿತಿಳಿದು ನೋಡಿ, ಪೃಥ್ವಿ ಅಪ್ಪು ತೇಜ ವಾಯು ಆಕಾಶ ರವಿಶಶಿಯಾದಿಗೂ ಹೆಸರದೆಸೆಯ ಕೊಂಡುಕೊಂಡು, ಇಂತಿವು ಮೂರನು ಕೂಡಿಕೊಂಡು, ಒಂದಕ್ಕೆ ಒಂದು ಕಟ್ಟಿ ಹಾಕಿ ಪ್ರಾಸ ಬಿದ್ದಿತೊ ಬೀಳದೊ ಎಂದು ತಮ್ಮನದಲ್ಲಿ ತಾವು ಅಳದಾಡುವಂತೆ ಒಂದು ಹೊದವಿದ ಪದ್ಯವನು ಮಾಡಿ ಇಡುವಂತಹ ಕಲಿಕೆಯ ಕವಿಗಳು ಮುಂದೆ ಅಜ್ಞಾನದಿಂದ ಮುಕ್ತಿಯ ದಾರಿಯ ಕಾಣಲರಿಯದೆ ಮುಂದುಗಾಣದ ತುರುಕರು ಅಘೋರವೆಂಬ ನರಕದ ಕಿಚ್ಚಿನ ಕೊಂಡದೊಳಗೆ ಬಿದ್ದು ಹೋರಟೆಗೊಳ್ಳುತ್ತಿದ್ದರು ಕಾಣಿರೋ. ಅದೆಂತೆಂದರೆ ; ಛಂದಸ್ಸು ನಿಘಂಟು ಅಮರ ವ್ಯಾಕರಣ ನಾನಾರ್ಥಂಗಳೆಂಬುವೆಲ್ಲ ಕವಿಯೆಂಬ ಕುಂಬಾರ ಮಾಡಿ ಸವಿದುಂಡು ಬೀದಿಯೊಳಗೆ ಬಿಟ್ಟಿರ್ದ ಎಂಜಲ ಪತ್ರಾವಳಿಯೊಳಗಿನ ಭೋಜನಕ್ಕೆ ಕವಿಗಳೆಂಬುವ ಆರುಮಂದಿ ಸೊಣಗಗಳು ಕೂಗಿಡುತಿರ್ದವು ಕಾಣಿರೋ. ಅದೆಂತೆಂದರೆ:ಕಾಮ ಘನವೆಂದು ಮಾಡಿದಾತ ಒಬ್ಬ ಕವಿಯೆಂಬ ಸೊಣಗ. ಕ್ರೋಧ ಘನವೆಂದು ಮಾಡಿದಾತ ಒಬ್ಬ ಕವಿಯೆಂಬ ಸೊಣಗ. ಮದ ಘನವೆಂದು ಮಾಡಿದಾತ ಒಬ್ಬ ಕವಿಯೆಂಬ ಸೊಣಗ. ಮೋಹ ಘನವೆಂದು ಮಾಡಿದಾತ ಒಬ್ಬ ಕವಿಯೆಂಬ ಶ್ವಾನನು. ಮಚ್ಚರ ಘನವೆಂದು ಮಾಡಿದಾತ ಒಬ್ಬ ಕವಿಯೆಂಬ ಶ್ವಾನನು. ಲೋಭ ಘನವೆಂದು ಮಾಡಿದಾತ ಒಬ್ಬ ಕವಿಯೆಂಬ ಶ್ವಾನನು. ಇಂತಿವರು ಆರು ಮಂದಿ ಕವಿಗಳೆಂಬ ಶ್ವಾನಗಳು ಕೂಡಿ ನಾ ಹೆಚ್ಚು ತಾ ಹೆಚ್ಚು ಎಂದು ಒಂದಕ್ಕೊಂದು ಕಾದಾಡಿ ಚಿತ್ತಪಲ್ಲಟವಾಗಿ, ಆ ಪತ್ರದೊಳಗಿನ ಬೋನದ ಸವಿಯನು ಬಿಟ್ಟು ಚಿತ್ತಪಲ್ಲಟವಾಗಿ, ಆ ಪತ್ರದ ತುಳಿಯನು ಹರಿದುಕೊಂಡು ತಿಂದು ಹಲವು ಕಡೆಗೆ ಹರಿದಾಡುತ್ತಿದ್ದವು ಕಾಣಿರೋ. ಅದು ಎಂತೆಂದರೆ :ಇಂತು ಕಾಯದ ಕೀಲನರಿಯದೆ ಮಾಡಿದ ಕವಿಗಳು ಕಾಲನ ಬಾಧೆಗಳೆಂಬ ಮರಣಕ್ಕೆ ಒಳಗಾಗಿ ಹೋದಂತೆ ಕುರುಡ ಕವಿಗಳಂ ಕಂಡು ನಗುತ್ತಿದ್ದಾತ ಸಿದ್ಧಮಲ್ಲನದಾತ ಮೇಗಣಗವಿಯ ಗುರುಸಿದ್ಧೇಶ್ವರಪ್ರಭುವೆ.
--------------
ಸಿದ್ಧಮಲ್ಲಪ್ಪ
-->