ಅಥವಾ

ಒಟ್ಟು 15 ಕಡೆಗಳಲ್ಲಿ , 8 ವಚನಕಾರರು , 15 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಗೋವಿನ ಹೊಟ್ಟೆಯಲ್ಲಿ ಘೃತವಿದ್ದಡೇನೊ ಆ ಗೋವು ದಿನದಿನಕ್ಕೆ ಪುಷ್ಟವಾಗಬಲ್ಲುದೆ ? ಅದು ಕಾರಣ_ ಆ ಗೋವ ಪೋಷಿಸಿ ಕರೆದು ಕಾಸಿ, ಘೃತವ ಮಾಡಿ ಆ ಗೋವಿಂಗೆ ಕುಡಿಯಲೆರೆದಡೆ ಆ ಗೋವು ದಿನದಿನಕ್ಕೆ ಪುಷ್ಟವಹುದು. ಹಾಂಗೆ, ತನ್ನಲ್ಲಿ ವಸ್ತುವಿದ್ದಡೇನೊ ? ವಸ್ತುವ ಗುರುಮುಖದಿಂದ ಕರಸ್ಥಲಕ್ಕೆ ಪಡೆದು, ಸತ್ಕ್ರಿಯೆಯಿಂದ ಪ್ರಾಣಕ್ಕೆ ವೇಧಿಸಿದಲ್ಲದೆ ಪ್ರಾಣಲಿಂಗವಾಗದು. ಕೂಡಲಚೆನ್ನಸಂಗಯ್ಯನಲ್ಲಿ, ಇಷ್ಟಲಿಂಗವ ಸತ್ಕ್ರಿಯೆಯಿಂದ ಪ್ರಾಣಕ್ಕೆ ವೇದ್ಥಿಸಿ, ತಾನೆಂಬ ಅನಿಷ್ಟವ ತೊಲಗಿಸಿದಲ್ಲದೆ ಪ್ರಾಣಲಿಂಗಸಂಬಂಧವಾಗಬಾರದು
--------------
ಚನ್ನಬಸವಣ್ಣ
ಗುರುಮುಖದಿಂದ ಪರಮಲಿಂಗವು ತನ್ನ ಕರವ ಸೇರಿದ ಬಳಿಕ ಆ ಲಿಂಗದಲ್ಲಿ ಸ್ನೇಹ ಮೋಹವ ಬಲಿದು, ಲಿಂಗಪ್ರೇಮಿಯಾಗಿ, ಲಿಂಗಭಾವದಲ್ಲಿ ತನ್ನ ಭಾವವ ಬಲಿದ ಬಳಿಕ ಅನ್ಯವಿಷಯವ್ಯಾಪ್ತಿಯ ವ್ಯವಹಾರದ ಭ್ರಾಂತಿಯಿಲ್ಲದಿರಬೇಕು ನೋಡಾ. ಇದೇ ಏಕಚತ್ತಮನೋಭಾವಿಯ ಗುಣ; ಇದೇ ಲಿಂಗಗ್ರಾಹಕನ ನಿರುತ. ಲಿಂಗವ ಮುಟ್ಟಿ ಮತ್ತೇನನೂ ಮುಟ್ಟದ ನಿಃಕಳಂಕನ ನೋಡಾ, ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.
--------------
ತೋಂಟದ ಸಿದ್ಧಲಿಂಗ ಶಿವಯೋಗಿಗಳು
ಆಚಾರವೆಂಬುದು ಕೂರಲಗು, ತಪ್ಪಿ ಬಂದಡೆ ಪ್ರಾಣವ ತಗಲುವುದು. ಅದು ಕಾರಣ, ಅರಿದರಿದು ಆಚರಿಸಬೇಕು. ಆಚಾರವಿಚಾರ ಉಭಯದ ವಿಚಾರವ ನೋಡದೆ, ಶಿವದೀಕ್ಷೆಯ ಮಾಡಲಾಗದು. ಅದೆಂತೆಂದಡೆ : ಪರರ ಹೆಣ್ಣಿಗೆ ಕಣ್ಣಿಡದಿಹುದೆ ಒಂದನೆಯ ಆಚಾರ. ಪರರ ದ್ರವ್ಯವ ಅಪಹಾರ ಮಾಡದಿಹುದೆ ಎರಡನೆ ಆಚಾರ. ಸುಳ್ಳಾಡದಿರವುದೆ ಮೂರನೆಯ ಆಚಾರ. ವಿಶ್ವಾಸಘಾತವ ಮಾಡದಿಹುದೆ ನಾಲ್ಕನೆಯ ಆಚಾರ. ಪ್ರಾಣಹಿಂಸೆಯ ಮಾಡದಿಹುದೆ ಐದನೆಯ ಆಚಾರ. ಸಕಲ ಶಿವಶರಣರ್ಗೆ ಸಂತೋಷವಂ ಪುಟ್ಟಿಸುವುದೆ ಆರನೆಯ ಆಚಾರ. ಸ್ವೀಕರಿಸಿದ ನೇಮವ ಪ್ರಾಣಾಂತ್ಯವಾಗಿ ಬಿಡೆನೆಂಬುವ ಏಳನೆಯ ಆಚಾರ. ಷಟ್ಸ್ಥಲದವರ ಧಿಕ್ಕರಿಸುವ ಜನರ ಸೀಳುವೆನೆಂಬುವ ವ್ರತವೆ ಎಂಟನೆ ಆಚಾರ. ಕೆಟ್ಟಜನರ ಸಹವಾಸ ಮಾಡದಿಹುದೆ ಒಂಬತ್ತನೆಯ ಆಚಾರ. ಸಜ್ಜನ ಸಂಗತಿಯ ಬಿಡದಿಹುದೆ ಹತ್ತನೆಯ ಆಚಾರ ಅನ್ಯದೇವತಾಭಜನೆಗೆ ವಿಮುಖನಾಗುವುದೆ ಹನ್ನೊಂದನೆಯ ಆಚಾರ. ಶಿವನೇ ಸರ್ವದೇವಶಿಖಾಮಣಿಯೆಂದು ಮನದಲ್ಲಿ ಅಚ್ಚೊತ್ತಿಪ್ಪುದೆ ಹನ್ನೆರಡನೆಯ ಆಚಾರ. ಶಿವನಿಗೆ ಶಿವಗಣಂಗಳಿಗೆ ಭೇದವ ಮಾಡದಿಹುದೆ ಹದಿಮೂರನೆಯ ಆಚಾರ. ಸಕಲ ಜೀವಿಗಳಿಗೆ ಹಿತವ ಬಯಸುವುದೆ ಹದಿನಾಲ್ಕನೆಯ ಆಚಾರ. ಸರ್ವರಿಗೆ ಹಿತವ ಮಾಡುವುದೆ ಹದಿನೈದನೆಯ ಆಚಾರ. ಕಡ್ಡಿಯ ಲಿಂಗಕ್ಕೆ ತೋರಿ ದಂತಧಾವನೆಯ ಮಾಡುವುದೆ ಹದಿನಾರನೆಯ ಆಚಾರ. ಸರ್ವಾವಯವವ ಸ್ವಚ್ಛ ಪ್ರಕ್ಷಾಳಿಸುವುದೆ ಹದಿನೇಳನೆಯ ಆಚಾರ ಲಿಂಗಮುದ್ರೆಯಿಲ್ಲದ ಗುಡಿಯಲ್ಲಿ ಪಾಕವ ಮಾಡದಿಹುದೆ ಹದಿನೆಂಟನೆಯ ಆಚಾರ. ಪ್ರಣವಮುದ್ರೆ ಇಲ್ಲದ ವಸ್ತ್ರ ಹೊದೆಯದಿಹುದೆ ಹತ್ತೊಂಬತ್ತನೆಯ ಆಚಾರ. ಹುಟ್ಟಿದ ಶಿಶುವಿಗೆ ಲಿಂಗಾಧಾರಣ ಮಾಡದೆ, ತಾಯ ಮೊಲೆಹಾಲು ಜೇನುತುಪ್ಪ ಮುಟ್ಟಿಸದಿಹುದೆ ಇಪ್ಪತ್ತನೆಯ ಆಚಾರ. ಆಡಿದ ಭಾಷೆಯ ಕಡೆಪೂರೈಸುವುದೆ ಇಪ್ಪತ್ತೊಂದನೆಯ ಆಚಾರ. ಸತ್ಯವ ನುಡಿದು ತಪ್ಪದಿಹುದೆ ಇಪ್ಪತ್ತೆರಡನೆಯ ಆಚಾರ. ತುರುಗಳ ಕಟ್ಟಿ ರಕ್ಷಿಸುವುದೆ ಇಪ್ಪತ್ತುಮೂರನೆಯ ಆಚಾರ. ತುರುಗಳಿಗೆ ಲಿಂಗಮುದ್ರೆಯಿಕ್ಕಿ ಹಾಲು ಕರೆವುದು ಇಪ್ಪತ್ತುನಾಲ್ಕನೆಯ ಆಚಾರ. ಮಂತ್ರಸಹಿತ ಗೋಮಯವ ಹಿಡಿದು, ಮಂತ್ರಸಹಿತ ಪುಟವಿಕ್ಕಿ ಭಸ್ಮದ ರಾಶಿಯ ಮಾಡುವುದೆ ಇಪ್ಪತ್ತೈದನೆಯ ಆಚಾರ. ಆ ಭಸ್ಮದ ರಾಶಿಯ ಪಾದೋದಕದೊಡನೆ ಉಂಡಿಯ ಕಟ್ಟುವುದೆ ಇಪ್ಪತ್ತಾರನೆಯ ಆಚಾರ. ವಿಧಿಯರಿತು ಸ್ಥಾನವರಿತು ರುದ್ರಾಕ್ಷಿಗ? ಧರಿಸುವುದೆ ಇಪ್ಪತ್ತೇಳನೆಯ ಆಚಾರ. ಶಿವಾನುಭವವ ಶಾಸ್ತ್ರವ ವಿಚಾರಿಸುವುದೆ ಇಪ್ಪತ್ತೆಂಟನೆಯ ಆಚಾರ. ಮನವ ನೋಯಿಸಿ ಮಾತನಾಡದಿಹುದೆ ಇಪ್ಪತ್ತೊಂಬತ್ತನೆಯ ಆಚಾರ. ಲಿಂಗದ ಕಲೆಯರಿತು ಲಿಂಗವ ಪೂಜಿಸುವುದೆ ಮೂವತ್ತನೆಯ ಆಚಾರ. ಗುರುಮುಖದಿಂದ `ತಾನಾರು' ತನ್ನ ನಿಜವೇನೆಂದು ಬೆಸಗೊಳ್ಳವುದೆ ಮೂವತ್ತೊಂದನೆಯ ಆಚಾರ. ಷಡ್ವರ್ಗಂಗಳ ಮೆಟ್ಟಿ ಷಟ್ಸ್ಥಲವನಿಂಬುಗೊಂಡುದೆ ಮೂವತ್ತೆರಡನೆಯ ಆಚಾರ. ಅವಿಚ್ಛಿನ್ನವಾಗಿ ಅಂಗತ್ರಯದಲ್ಲಿ ಮನ ಓಕರಿಸಿಕೊಂಡುದೆ ಮೂವತ್ತುಮೂರನೆಯ ಆಚಾರ. ಲಿಂಗದಲ್ಲಿ ಶಿಲೆಯ ಭಾವವನರಸದಿಹುದೆ ಮೂವತ್ತುನಾಲ್ಕನೆಯ ಆಚಾರ. ಜಂಗಮದಲ್ಲಿ ಕುಲವನರಸದಿಹುದೆ ಮೂವತ್ತೈದನೆಯ ಆಚಾರ. ವಿಭೂತಿಯ ಮಾಣ್ಬದಿಹುದೆ ಮೂವತ್ತಾರನೆಯ ಆಚಾರ. ರುದ್ರಾಕ್ಷಿಯ ಶುದ್ಧವ ಮಾಡಿ ಮಣಿಗಳ ಅರಸುವುದೆ ಮೂವತ್ತೇಳನೆಯ ಆಚಾರ. ಪಾದೋದಕದಲ್ಲಿ ಉಚ್ಛಿಷ್ಟವಳಿದುದೆ ಮೂವತ್ತೆಂಟನೆಯ ಆಚಾರ. ಪ್ರಸಾದದಲ್ಲಿ ರುಚಿಯ ನೋಡದಿಹುದೆ ಮೂವತ್ತೊಂಬತ್ತನೆಯ ಆಚಾರ. ಮಂತ್ರದಲ್ಲಿ ಕುತ್ಸಿತಕಲ್ಪನೆಯ ಮಾಡದಿಹುದೆ ನಾಲ್ವತ್ತೆಳನೆಯ ಆಚಾರ. ಲಿಂಗಾರ್ಚನವಿರಹಿತ ಭೋಜನ ಮಾಡದಿಹುದೆ ನಾಲ್ವತ್ತೊಂದನೆಯ ಆಚಾರ. ಐಕ್ಯರ ಸಮಾಧಿಗೊಳಿಸಿ ತಾನು ಲಿಂಗಪೂಜೆಯ ಮಾಡುವುದೆ ನಾಲ್ವತ್ತೆರಡನೆಯ ಆಚಾರ. ಲಿಂಗದ್ರೋಹವ ಕೇಳಿ ತಾನು ಪ್ರಾಣಬಿಡುವುದೆ ನಾಲ್ವತ್ತುಮೂರನೆಯ ಆಚಾರ. ಜಂಗಮದ್ರೋಹವ ಕೇಳಿ ತಾನು ಐಕ್ಯನಾಗುವುದೆ ನಾಲ್ವತ್ತುನಾಲ್ಕನೆಯ ಆಚಾರ. ಲಿಂಗದ್ರೋಹವ ಮಾಡಿದವನ ಪ್ರಾಣವ ಭೇದಿಸುವುದೆ ನಾಲ್ವತ್ತೈದನೆಯ ಆಚಾರ. ಜಂಗಮದ್ರೋಹವ ಮಾಡಿದವನ ಶಿರವನೀಡಾಡುವುದೆ ನಾಲ್ವತ್ತಾರನೆಯ ಆಚಾರ. ಅಷ್ಟಾವರಣಸಂಗವ ಮಾಡುವ ಭೇದವ ತಿಳಿವುದೆ ನಾಲ್ವತ್ತೇ?ನೆಯ ಆಚಾರ. ತಾನಾರು ಲಿಂಗವಾರು ಎಂಬ ಭೇದವು ತಿಲಮಾತ್ರ ಇಲ್ಲದಿರುವುದೆ ನಾಲ್ವತ್ತೆಂಟನೆಯ ಆಚಾರ. ತನ್ನ ನಿಜವಿಚಾರವ ತಾ ಮರೆಯದೆ ಷಟ್ಸ್ಥಲದವರಿಗೆ ಅರುಹಿ ತನ್ನಂತೆ ಮಾಡುವುದೆ ನಾಲ್ವತ್ತೊಂಬತ್ತನೆಯ ಆಚಾರ. ಇಂತಿಷ್ಟು ಆಚಾರಂಗಳ ಕಡೆಮುಟ್ಟಿಸುವುದೆ, ಕೂಡಲಚೆನ್ನಸಂಗಮದೇವರಲ್ಲಿ ಐವತ್ತನೆಯ ಆಚಾರ ನೋಡಾ ಸಿದ್ದರಾಮಯ್ಯಾ.
--------------
ಚನ್ನಬಸವಣ್ಣ
ಗುರುಮುಖದಿಂದ ಕೊಂಬುದು ಶುದ್ಧಪ್ರಸಾದ. ಲಿಂಗಮುಖದಿಂದ ಕೊಂಬುದು ಸಿದ್ಧಪ್ರಸಾದ. ಜಂಗಮಮುಖದಿಂದ ಕೊಂಬುದು ಪ್ರಸಿದ್ಧ ಪ್ರಸಾದ. ಗುರುಪ್ರಸಾದದಿಂದ ಎನ್ನ ತನು ಶುದ್ಧವಾಯಿತ್ತು. ಲಿಂಗಪ್ರಸಾದದಿಂದ ಎನ್ನ ಮನ ಶುದ್ಧವಾಯಿತ್ತು. ಜಂಗಮಪ್ರಸಾದದಿಂದ ಎನ್ನ ಪ್ರಾಣ ಶುದ್ಧವಾಯಿತ್ತು. ನಿಮ್ಮ ಪ್ರಸಾದದಿಂದ ಶುದ್ಧವಾಗದೆ ತನ್ನಿಂದ ತಾನೆ ಶುದ್ಧನಾದೆನೆಂಬ ವಾಗದ್ವೆ ೈತಿಯ ತೋರದಿರ. ಜಂಗಮ ಪ್ರಸಾದವ ಲಿಂಗಕ್ಕೆ ಕೊಟ್ಟು ಲಿಂಗ ಪ್ರಸಾದವ ತಾ ಗ್ರಹಿಸುವದೇ ಆಚಾರ. ಹೀಂಗಲ್ಲದೆ, ಜಂಗಮ ಪ್ರಸಾದವ ಅಂಗಕ್ಕೆ ಕೊಡಬಹುದಲ್ಲದೆ ಲಿಂಗಕ್ಕೆ ಕೊಡಬಾರದೆಂಬ ಅನಾಚಾರಿಗೆ ನಾಯಕನರಕ ತಪ್ಪದು ಕಾಣಾ, ನೀ ಸಾಕ್ಷಿಯಾಗಿ ಎಲೆ ಶಿವನೇ, ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.
--------------
ತೋಂಟದ ಸಿದ್ಧಲಿಂಗ ಶಿವಯೋಗಿಗಳು
ರುಚಿಯಲ್ಲಿ ಸಂಹಾರ, ಸ್ಪರುಶನದಲ್ಲಿ ಸೃಷ್ಟಿ, ರೂಪಿನಲ್ಲಿ ಸ್ಥಿತಿ, ಇಂತು ಸಂಹಾರಕ್ಕೆ ನಾದವೇ ಮೂಲವು, ಸೃಷ್ಟಿಗೆ ಬಿಂದುವೇ ಮೂಲವು, ಸ್ಥಿತಿಗೆ ಕಳೆಯೇ ಮೂಲವು. ಸೃಷ್ಟಿಗೆ ಪೃಥ್ವಿಯೇ ಆಧಾರಮಾಯಿತ್ತು ; ಸ್ಥಿತಿಗೆ ಆತ್ಮನೇ ಆಧಾರಮಾಯಿತ್ತು. ಸೃಷ್ಟಿಮೂಲಮಪ್ಪ ಸ್ಪರುಶನದಲ್ಲಿ ಆನಂದವೂ ಸಂಹಾರಮೂಲಮಪ್ಪ ರುಚಿಯಲ್ಲಿ ಜ್ಞಾನವೂ ಸ್ಥಿತಿಮೂಲಮಪ್ಪ ರೂಪಿನಲ್ಲಿ ನಿಜವೂ ನೆಲೆಗೊಂಡು, ಸೃಷ್ಟಿಯೆ ಸ್ಥಿತಿಹೇತುವಾಗಿ, ಸ್ಥಿತಿಯೇ ಸಂಹಾರಹೇತುವಾಗಿ, ಸಂಹಾರವೇ ಸೃಷ್ಟಿಹೇತುವಾಗಿ, ರುಚಿಗೆ ಅಗ್ನಿಯೂ, ಸ್ಪರುಶನಕ್ಕೆ ಜಲವೂ, ರೂಪಿಗೆ ಪೃಥ್ವಿಯೂ ಕಾರಣಮಾಗಿ, ಇಂತು ಅವಸ್ತ್ರಮಾಗಿ ತಿರುಗುತ್ತಿರ್ಪ ಪರಶಿವನಾಜ್ಞಾಚಕ್ರವನ್ನು ಗುರುಮುಖದಿಂದ ವಿಚಾರಿಸಿ ತಿಳಿದ ಮಹಾಪುರುಷನು ಈ ಚಕ್ರಕ್ಕೆ ತಗಲಿರ್ಪ ಮನವೆಂಬ ಕೀಲನ್ನು ಗುರುವಿತ್ತ ಲಿಂಗವೆಂಬ ಪರಶುವಿನಿಂ ಭಾವವೆಂಬ ಹಸ್ತದಲ್ಲಿ ಪಿಡಿದು ಖಂಡಿಸಲು, ಆ ಚಕ್ರದ ಚಲನೆ ನಿಂದಿತ್ತು. ಸ್ಪರ್ಶನದಲ್ಲಿರ್ಪ ಆನಂದರಸಮಂಗದಲ್ಲಿ ಕೂಡಿ, ಸಂಹಾರಾಗ್ನಿಯಂ ನಂದಿಸಿತ್ತು. ಆ ಸಂಹಾರದೊಳಗಿರ್ಪ ಜ್ಞಾನಾಗ್ನಿಯು ಲಿಂಗದೊಳಗೆ ಬೆರದು, ಸೃಷ್ಟಿಸ್ಥಿತಿರೂಪಮಾದ ಪೃಥ್ವಿ ಅಪ್ಪುಗಳಂ ಸಂಹರಿಸಿತ್ತು. ಸ್ಥಿತಿಯಲ್ಲಿರ್ಪ ನಿಜಲಿಂಗದಲ್ಲಿ ನಿಜಮಾಯಿತ್ತು. ಇಂತು ಆ ಚಕ್ರವಳಿಯೆ, ಆತ್ಮಭ್ರಮೆಯಳಿದು, ಆತ್ಮವೇ ಲಿಂಗಮಾಗಿ, ಆಕಾಶವೇ ಅಂಗವಾಗಿ, ವಾಯುವೇ ಆ ಎರಡರ ಸಂಗದಲ್ಲಿ ಬೆರದು ಭೇದದೋರದಿರ್ಪುದೆ ಲಿಂಗೈಕ್ಯ ಕಾಣಾ ಮಹಾಘನ ದೊಡ್ಡದೇಶಿಕಾರ್ಯಗುರುಪ್ರಭುವೆ.
--------------
ಮುಮ್ಮಡಿ ಕಾರ್ಯೇಂದ್ರ /ಮುಮ್ಮಡಿ ಕಾರ್ಯ ಕ್ಷಿತೀಂದ್ರ
ಆಚಾರಲಿಂಗ ಗುರುಲಿಂಗ ಶಿವಲಿಂಗ ಜಂಗಮಲಿಂಗ ಪ್ರಸಾದಲಿಂಗ ಮಹಾಲಿಂಗವೆಂದಿಂತು ಲಿಂಗಸ್ಥಲವಾರಕ್ಕಂ ವಿವರ: ಆಚಾರಲಿಂಗಸ್ಥಲ ತ್ರಿವಿಧ:ಸದಾಚಾರ, ನಿಯತಾಚಾರ, ಗಣಾಚಾರ ಇದಕ್ಕೆ ವಿವರ: ಎಲ್ಲ ಜನವಹುದೆಂಬುದೆ ಸದಾಚಾರ. ಹಿಡಿದ ವ್ರತನಿಯಮವ ಬಿಡದಿಹುದೆ ನಿಯತಾಚಾರ. ಶಿವನಿಂದೆಯ ಕೇಳದಿಹುದೆ ಗಣಾಚಾರ. ಗುರುಲಿಂಗಸ್ಥಲ ತ್ರಿವಿಧ:ದೀಕ್ಷೆ, ಶಿಕ್ಷೆ, ಸ್ವಾನುಭಾವ. ಇದಕ್ಕೆ ವಿವರ : ದೀಕ್ಷೆಯೆಂದಡೆ ಗುರು, ಶಿಕ್ಷೆಯೆಂದಡೆ ಜಂಗಮ, ಸ್ವಾನುಭಾವವೆಂದಡೆ ತನ್ನಿಂದ ತಾನರಿವುದು. ಶಿವಲಿಂಗಸ್ಥಲ ತ್ರಿವಿಧ:ಇಷ್ಟಲಿಂಗ, ಪ್ರಾಣಲಿಂಗ, ತೃಪ್ತಿಲಿಂಗ ಇದಕ್ಕೆ ವಿವರ : ಶ್ರೀಗುರು ಕರಸ್ಥಲದಲ್ಲಿ ಅನುಗ್ರಹವ ಮಾಡಿಕೊಟ್ಟುದೀಗ ಇಷ್ಟಲಿಂಗ, ತನುಗುಣ ನಾಸ್ತಿಯಾದುದೇ ಪ್ರಾಣಲಿಂಗ, ಜಾಗ್ರಸ್ವಪ್ನಸುಷುಪ್ತಿಯಲ್ಲಿ ಲಿಂಗವಲ್ಲದೆ ಪೆರತೊಂದನರಿಯದಿಪ್ಪುದೆ ತೃಪ್ತಿಲಿಂಗ. ಜಂಗಮಲಿಂಗಸ್ಥಲ ತ್ರಿವಿಧ :ಸ್ವಯ, ಚರ, ಪರ, ಇದಕ್ಕೆ ವಿವರ : ಸ್ವಯವೆಂದಡೆ ತಾನು. ಚರವೆಂದಡೆ ಲಾಂಛನ ಮುಂತಾಗಿ ಚರಿಸುವುದು. ಪರವೆಂದಡೆ ಅರಿವು ಮುಂತಾಗಿ ಚರಿಸುವುದು. ಪ್ರಸಾದಲಿಂಗಸ್ಥಲ ತ್ರಿವಿಧ :ಶುದ್ಧ, ಸಿದ್ಧ, ಪ್ರಸಿದ್ಧ ಇದಕ್ಕೆ ವಿವರ : ಶುದ್ಧವೆಂದಡೆ ಗುರುಮುಖದಿಂದ ಮಲತ್ರಯವ ಕಳೆದುಳಿದ ಶೇಷ, ಸಿದ್ಧವೆಂದಡೆ ಲಿಂಗಮುಖದಿಂದ ಕರಣಮಥನಂಗಳ ಕಳೆದುಳಿದ ಶೇಷ. ಪ್ರಸಿದ್ಧವೆಂದಡೆ ಜಂಗಮಮುಖದಿಂದ ಸರ್ವಚೈತನ್ಯಾತ್ಮಕ ತಾನೆಯಾಗಿ ಖಂಡಿತವಳಿದುಳಿದ ಶೇಷ. ಮಹಾಲಿಂಗಸ್ಥಲ ತ್ರಿವಿಧ:ಪಿಂಡಜ, ಅಂಡಜ, ಬಿಂದುಜ. ಇದಕ್ಕೆ ವಿವರ : ಪಿಂಡಜವೆಂದಡೆ ಘಟಾಕಾಶ. ಅಂಡಜವೆಂದಡೆ ಬ್ರಹ್ಮಾಂಡ. ಬಿಂದುಜವೆಂದಡೆ ಮಹಾಕಾಶ. ಇಂತು ಲಿಂಗಸ್ಥಲ ಅರಕ್ಕಂ ಹದಿನೆಂಟು ಸ್ಥಲವಾಯಿತ್ತು. ಇನ್ನು ಅಂಗಸ್ಥಲವಾವುವೆಂದಡೆ: ಭಕ್ತ, ಮಾಹೇಶ್ವರ, ಪ್ರಸಾದಿ, ಪ್ರಾಣಲಿಂಗಿ, ಶರಣ, ಐಕ್ಯ. ಇನ್ನು ಅಂಗಸ್ಥಲವಾರಕ್ಕೆ ವಿವರ : ಭಕ್ತಸ್ಥಲ ತ್ರಿವಿಧ :ಗುರುಭಕ್ತ, ಲಿಂಗಭಕ್ತ, ಜಂಗಮಭಕ್ತ. ತನುಕ್ರೀಯಿಂದ ತನುಮನಧನವನರ್ಪಿಸುವನಾಗಿ ಗುರುಭಕ್ತ. ಮನಕ್ರೀಯಿಂದ ಮನತನುಧನವನರ್ಪಿಸುವನಾಗಿ ಲಿಂಗಭಕ್ತ. ಧನಕ್ರೀಯಿಂದ ಧನಮನತನುವನರ್ಪಿಸುವನಾಗಿ ಜಂಗಮಭಕ್ತ. ಮಾಹೇಶ್ವರಸ್ಥಲ ತ್ರಿವಿಧ:ಇಹಲೋಕವೀರ, ಪರಲೋಕವೀರ, ಲಿಂಗವೀರ. ಅದಕ್ಕೆ ವಿವರ : ಮತ್ರ್ಯಲೋಕದ ಮಹಾಗಣಂಗಳು ಮೆಚ್ಚುವಂತೆ, ಷಡ್ದರ್ಶನಂಗಳ ನಿರಸನವ ಮಾಡಿ, ತನ್ನ ಸಮಯಕ್ಕೆ ಪ್ರಾಣವ ವೆಚ್ಚಿಸುವನಾಗಿ ಇಹಲೋಕವೀರ. ದೇವಲೋಕದ ದೇವಗಣಂಗಳು ಮೆಚ್ಚುವಂತೆ, ಸರ್ವಸಂಗಪರಿತ್ಯಾಗವ ಮಾಡಿ ಚತುರ್ವಿಧಪದಂಗಳ ಧರ್ಮಾರ್ಥಕಾಮಮೋಕ್ಷಂಗಳ ಬಿಟ್ಟಿಹನಾಗಿ ಪರಲೋಕವೀರ. ಅಂಗಲಿಂಗಸಂಗದಿಂದ ಸರ್ವಕರಣಂಗಳು ಸನ್ನಹಿತವಾಗಿಪ್ಪನಾಗಿ ಲಿಂಗವೀರ. ಪ್ರಸಾದಿಸ್ಥಲ ತ್ರಿವಿಧ :ಅರ್ಪಿತಪ್ರಸಾದಿ, ಅವಧಾನಪ್ರಸಾದಿ, ಪರಿಣಾಮಪ್ರಸಾದಿ ಅದಕ್ಕೆ ವಿವರ : ಕಾಯದ ಕೈಯಲ್ಲಿ ಸಕಲಪದಾರ್ಥಂಗಳು ಇಷ್ಟಲಿಂಗಕ್ಕೆ ಕೊಟ್ಟು ಕೊಂಬನಾಗಿ ಅರ್ಪಿತಪ್ರಸಾದಿ. ಪಂಚೇಂದ್ರಿಯಂಗಳಲ್ಲಿ ಪಂಚಲಿಂಗಪ್ರತಿಷೆ*ಯ ಮಾಡಿ, ಅಲ್ಲಲ್ಲಿ ಬಂದ ಸುಖವನಲ್ಲಲ್ಲಿ ಮನದ ಕೈಯಲ್ಲಿ ಕೊಟ್ಟು ಕೊಂಬನಾಗಿ ಅವಧಾನಪ್ರಸಾದಿ. ಅಂಗಾಶ್ರಯವಳಿದು ಲಿಂಗಾಶ್ರಯವುಳಿದು, ಭಾವಭರಿತನಾಗಿಪ್ಪನಾಗಿ ಪರಿಣಾಮಪ್ರಸಾದಿ. ಪ್ರಾಣಲಿಂಗಿಸ್ಥಲ ತ್ರಿವಿಧ :ಆಚಾರಪ್ರಾಣಿ, ಲಿಂಗಪ್ರಾಣ, ಜಂಗಮಪ್ರಾಣಿ. ಅದಕ್ಕೆ ವಿವರ : ಮನೋವಾಕ್ಕಾಯದಲ್ಲಿ ಆಚಾರವ ಅವಗ್ರಹಿಸಿಹನಾಗಿ ಆಚಾರಪ್ರಾಣಿ. ಬಾಹ್ಯೋಪಚಾರಂಗಳ ಮರೆದು ಲಿಂಗಕ್ಕೆ ತನ್ನ ಪ್ರಾಣವನೆ ಪೂಜೆಯ ಮಾಡುವನಾಗಿ ಲಿಂಗಪ್ರಾಣಿ. ಬಾಹ್ಯಭಕ್ತಿಯ ಮರೆದು ಜಂಗಮಕ್ಕೆ ತನ್ನ ತನುಮನಪ್ರಾಣಂಗಳ ನಿವೇದಿಸುವನಾಗಿ ಜಂಗಮಪ್ರಾಣಿ ಶರಣಸ್ಥಲ ತ್ರಿವಿಧ:ಇಷ್ಟಲಿಂಗಾರ್ಚಕ, ಪ್ರಾಣಲಿಂಗಾರ್ಚಕ, ತೃಪ್ತಿಲಿಂಗಾರ್ಚಕ ಅದಕ್ಕೆ ವಿವರ : ಅನಿಷ್ಟ ನಷ್ಟವಾಯಿತ್ತಾಗಿ ಇಷ್ಟಲಿಂಗಾರ್ಚಕ. ಸ್ವಯಪರವನರಿಯನಾಗಿ ಪ್ರಾಣಲಿಂಗಾರ್ಚಕ. ಇಹಪರವನರಿಯನಾಗಿ ತೃಪ್ತಿಲಿಂಗಾರ್ಚಕ. ಐಕ್ಯಸ್ಥಲ ತ್ರಿವಿಧ :ಕಾಯಲಿಂಗೈಕ್ಯ, ಜೀವಲಿಂಗೈಕ್ಯ, ಭಾವಲಿಂಗೈಕ್ಯ. ಅದಕ್ಕೆ ವಿವರ : ಕ್ರಿಯೆಯರತುದೆ ಕಾಯಲಿಂಗೈಕ್ಯ. ಅನುಭಾವವರತುದೆ ಜೀವಲಿಂಗೈಕ್ಯ. ಅರಿವು ಸಿನೆ ಬಂಜೆಯಾದುದೆ ಭಾವಲಿಂಗೈಕ್ಯ. ಇಂತೀ ಅಂಗಸ್ಥಲ ಅರಕ್ಕಂ ಹದಿನೆಂಟು ಸ್ಥಲವಾಯಿತ್ತು. ಉಭಯಸ್ಥಲ ಮೂವತ್ತಾರರೊಳಗಾದ ಸರ್ವಾಚಾರಸಂಪತ್ತನು ಕೂಡಲಚೆನ್ನಸಂಗಯ್ಯನಲ್ಲಿ ಬಸವಣ್ಣನೆ ಬಲ್ಲ.
--------------
ಚನ್ನಬಸವಣ್ಣ
ಅರಿದಾಚರಿಸುವವನಾಚರಣೆ ಬ್ರಹ್ಮಮಯ. ಅರಿಯದವನಾಚರಣೆ ಮಾಯಾಮಯ. ಅರಿಯಬೇಕು, ಅರಿಯಬೇಕು ಗುರುಮುಖದಿಂದ. ಆರು ಪರಶಿವನೆಂಬುದನರಿಯದವನರಿವು, ಸ್ವಪ್ನದಲ್ಲಿಯ ರತಿಯಂತೆ, ರತಿಯಲ್ಲಿಯ ರಾಜಸುತನಂತೆ ನೋಡಾ, ಕಪಿಲಸಿದ್ಧಮಲ್ಲಿಕಾರ್ಜುನಾ.
--------------
ಸಿದ್ಧರಾಮೇಶ್ವರ
ಏನೆಂದುಪಮಿಸುವೆನಯ್ಯಾ ತನ್ನಿಂದ ತಾ ತೋರದೆ, ಗುರುಮುಖದಿಂದ ತೋರಿದ ತನ್ನ ನಿಲವ, ನಿರುಪಮನು. ಶಬ್ದಮುಗ್ಧವಾಗಿ, ಇದ್ದೆಡೆಯನಿದಿರಿಂಗೆ ತೋರದೆ ಇರವೆ ಪರವಾಗಿರ್ದ ಅಜಡನು. ಇನನುದಯಕಾಲಕ್ಕೆ ಕುಕ್ಕುಟ ಧ್ವನಿದೋರುವಂತೆ ಘನಮಹಿಮರ ದರ್ಶನದಿಂದ ಸತ್ಪ್ರಣವವ ತಾನಾಗಿ ನುಡಿದ ಮೂಲಿಗನು, ಕೂಡಲಸಂಗಮದೇವರಲ್ಲಿ ಬೆರೆಸಿ ಬೇರಿಲ್ಲದಿಪ್ಪ ಮರುಳುಶಂಕರದೇವರ ನಿಲವ ಪ್ರಭುದೇವರು ಸಿದ್ಧರಾಮಯ್ಯದೇವರು ಹಡಪದಪ್ಪಣ್ಣನಿಂದ ಕಂಡು ಎನ್ನ ಜನ್ಮ ಸಫಲವಾಯಿತ್ತಯ್ಯಾ.
--------------
ಬಸವಣ್ಣ
ಪುರುಷನ ವೀರ್ಯವೇ ಸ್ತ್ರೀಗೆ ಶಕ್ತಿಯಾಗಿ, ತದ್ದಾರಣಬಲದಿಂ ಅದೇ ಸಾಕಾರಮಾಗಿ ಸೃಷ್ಟಿಯಾದಲ್ಲಿ, ಆ ಶಿಶುವನು ರಕ್ಷಿಸುವುದಕ್ಕೆ ಆ ಸತಿಯೇ ಕಾರಣಮಾಗಿರ್ಪಂತೆ, ಸದಾಶಿವನ ವೀರ್ಯರೂಪಸುವರ್ಣವೇ ವಿಷ್ಣುವಿಗೆ ಶಕ್ತಿಯಾಗಿ, ತದ್ಧಾರಣಬಲದಿಂದ ತದ್ರೂಪಮಾಗಿರ್ಪ ರಜೋಗುಣಮೂರ್ತಿಯಾದ ಬ್ರಹ್ಮಾದಿಸಕಲಪಂಚಮಂ ಸೃಷ್ಟಿಸಿ, ತದ್ರಕ್ಷಣಕ್ಕೆ ತಾನೇ ಕಾರಣಮಾಗಿರ್ಪನು. ಇಂತಪ್ಪ ಶಿವಶಕ್ತಿಗಳ ಮಹಿಮೆಯಂ ನಾನೆಂಬ ರಜೋಗುಣವೇ ಮೆರೆಗೊಂಡಿರ್ಪುದು. ತತ್ಸಂಗಕ್ಕೂ ತಾನೇ ಉಪಾಧಿಕಾರಣಮಾಗಿರ್ಪ ಭೇದಮಂ ಗುರುಮುಖದಿಂದ ತಿಳಿದು ನೋಡಿದಲ್ಲಿ, ಅವರಿಬ್ಬರ ಕ್ರೀಡೆಯನ್ನು ನೋಡಿ ನಾನಿಲ್ಲವಾದೆನು, ನಾನಿಲ್ಲವಾದಲ್ಲಿ ಅವೆರಡೂ ಒಂದೆಯಾಯಿತ್ತು. ದರ್ಪಣವಿಲ್ಲವಾದಲ್ಲಿಬಿಂಬ ಪ್ರತಿಬಿಂಬಗಳೇಕವಾದಂತೆ ಕಾಣಾ ಮಹಾಘನ ದೊಡ್ಡದೇಶಿಕಾರ್ಯಗುರುಪ್ರಭುವೆ.
--------------
ಮುಮ್ಮಡಿ ಕಾರ್ಯೇಂದ್ರ /ಮುಮ್ಮಡಿ ಕಾರ್ಯ ಕ್ಷಿತೀಂದ್ರ
ಆರೂ ಇಲ್ಲದ ಭೂಮಿಯಲ್ಲಿ ಬೇರಿಲ್ಲದ ರುದ್ರಾಕ್ಷಿಯ ಮರ ಪುಟ್ಟಿತ್ತು. ನೀರಿಲ್ಲದೆ ಆ ವೃಕ್ಷ ಪಲ್ಲವಿಸಿತ್ತು. ಆ ವೃಕ್ಷಕ್ಕೆ ರಕ್ತವರ್ಣದ ಒಂದು ಕುಸುಮ ಪುಟ್ಟಿತ್ತು. ಆ ಕುಸುಮದಲ್ಲಿ ಒಂದುಮುಖದ ಮೂರುಮುಖದ ಸಹಸ್ರಮುಖದ ದ್ವಿಮುಖದ ಷೋಡಶಮುಖದ ದ್ವಾದಶಮುಖದ ದಶಮುಖದ ಷಣ್ಮುಖದ ಚತುರ್ವಿಧಮುಖದ ಬ್ರಹ್ಮ ಮೊದಲಾಗಿ ರುದ್ರಾಕ್ಷಿಗಳು ಪುಟ್ಟಿದವು ನೋಡಾ. ಅಂತಪ್ಪ ರುದ್ರಾಕ್ಷಿಗಳನು ಗುರುಮುಖದಿಂದ ಪಡಕೊಂಡು ಒಂದುಮುಖದ ರುದ್ರಾಕ್ಷಿಯನು ಸ್ವರ್ಗಲೋಕದಲ್ಲಿಟ್ಟು, ಮೂರುಮುಖದ ರುದ್ರಾಕ್ಷಿಯನು ಪಾತಾಳದಲ್ಲಿಟ್ಟುಕೊಂಡು ಸಹಸ್ರಮುಖದ ರುದ್ರಾಕ್ಷಿಯನು ಮತ್ರ್ಯಲೋಕದಲ್ಲಿಟ್ಟು ದ್ವಿಮುಖದ ಉದ್ರಾಕ್ಷಿಯನು ಬೈಲಲ್ಲಿಟ್ಟು, ಷೋಡಶಮುಖದ ರುದ್ರಾಕ್ಷಿಯನು ಆಕಾಶದಲ್ಲಿಟ್ಟು ದ್ವಾದಶಮುಖದ ರುದ್ರಾಕ್ಷಿಯನು ವಾಯುವಿನಲ್ಲಿಟ್ಟು, ದಶಮುಖದ ರುದ್ರಾಕ್ಷಿಯನು ಅಗ್ನಿಯಲ್ಲಿಟ್ಟು, ಷಣ್ಮುಖದ ರುದ್ರಾಕ್ಷಿಯನು ನೀರಲ್ಲಿಟ್ಟು ಚತುರ್ಮುಖದ ರುದ್ರಾಕ್ಷಿಯನು ಭೂಮಿಯಲ್ಲಿಟ್ಟು, ಇದಲ್ಲದೆ ಕೆಲವು ರುದ್ರಾಕ್ಷಿಗಳನು ಬ್ರಹ್ಮಾಂಡದಲ್ಲಿಟ್ಟು ಇಂತೀ ಕ್ರಮದಲ್ಲಿ ರುದ್ರಾಕ್ಷಿಯನ್ನು ಧರಿಸಿ ಕಾಯಕವ ಮಾಡುತಿರ್ದೆನಯ್ಯ ಕಾಡನೊಳಗಾದ ಶಂಕರಪ್ರಿಯ ಚನ್ನಕದಂಬಲಿಂಗ ನಿರ್ಮಾಯಪ್ರಭುವೆ.
--------------
ಕಾಡಸಿದ್ಧೇಶ್ವರ
ಅಯ್ಯಾ, ಅನಾದಿ ಚಿನ್ಮಯಲಿಂಗವೆನ್ನ ಕರಸ್ಥಲಕ್ಕೆ ಬಂದುದು ಚೋದ್ಯ ನೋಡಾ ! ಅಯ್ಯಾ, ಆಕಾರ ನಿರಾಕಾರ ನಿರಂಜನಲಿಂಗವೆನ್ನ ಕುರಿತು ಗುರುಮುಖದಿಂದ ಸಾಕಾರವಾಗಿ ಬಂದುದೆನಗತಿ ಚೋದ್ಯ ನೋಡಾ. ಸುರೇಂದ್ರಜ ವಿಷ್ಣುಗಳರಿಯದ ಅನುಪಮ ಅಖಂಡ ಅವಿರಳಾನಂದ ಪರಬ್ರಹ್ಮವೆನ್ನನರಿದು ಬಂದುದಾಶ್ಚರ್ಯ ನೋಡಾ ! ಆರಾರರಿಯದಪ್ರತಿಮ ಗುರುನಿರಂಜನ ಚನ್ನಬಸವಲಿಂಗ ತಾನೇ ಬಂದ ಪರಿಯ ನೋಡಾ.
--------------
ದೇಶಿಕೇಂದ್ರ ಸಂಗನಬಸವಯ್ಯ
ಗುರುಮುಖದಿಂದ ಬಂದುದೇ ಗುರುಪ್ರಸಾದ ಆ ಪ್ರಸಾದವನು ಲಿಂಗಕ್ಕೆ ಅರ್ಪಿಸಿದಲ್ಲಿ ಲಿಂಗಪ್ರಸಾದ. ಭೋಜ್ಯ ಕಟ್ಟಿ ಲಿಂಗಕ್ಕೆ ಕೊಟ್ಟು ಸಲಿಸುವುದೇ ಜಂಗಮಪ್ರಸಾದ. ತತ್ಪ್ರಸಾದಿಗಳಲ್ಲಿ ಯಾಚಿಸಿ, ಅವರ ಪ್ರಸಾದವ ಕೊಂಬುದೆ ಪ್ರಸಾದಿಯ ಪ್ರಸಾದ. ಅಪೇಕ್ಷೆಯಿಂದ ಸಲಿಸುವುದೇ ಆಪ್ಯಾಯನಪ್ರಸಾದ. ಗುರುಲಿಂಗಜಂಗಮವ ಕಂಡು, ಆ ಸಮಯದಲ್ಲಿ ತೆಗೆದು ಕೊಂಬುವುದೇ ಸಮಯಪ್ರಸಾದ. ಪಂಚೇಂದ್ರಿಯಂಗಳಲ್ಲಿ ಪಂಚವಿಷಯ ಪದಾರ್ಥಂಗಳನು ಪಂಚವಿಧಲಿಂಗಕ್ಕೆ ಸಮರ್ಪಣ ಮಾಡುವುದೇ ಪಂಚೇಂದ್ರಿಯವಿರಹಿತಪ್ರಸಾದ. ಮನವೇ ಲಿಂಗ, ಬುದ್ಭಿಯೇ ಶಿವಜ್ಞಾನ, ಚಿತ್ತವೇ ಶಿವದಾಸೋಹ, ಅಹಂಕಾರದಲ್ಲಿ ಶಿವಚಿಂತನೆಯುಳ್ಳವನಾಗಿ ಸಲಿಸಿದ್ದೇ ಅಂತಃಕರಣವಿರಹಿತಪ್ರಸಾದ. ತ್ರಿವಿಧಾಂಗದಲ್ಲಿ ತ್ರಿವಿಧಲಿಂಗವ ಸಂಬಂಧಿಸಿ ಆ ಚಿದ್ಘನಲಿಂಗ ತಾನೆಂದರಿದು, ಆ ತ್ರಿವಿಧಲಿಂಗಕ್ಕೆ ಕೊಡುವುದೇ ಸದ್ಭಾವಪ್ರಸಾದ. ಬಹಿರಂಗದ ಪ್ರಪಂಚವ ನಷ್ಟಮಾಡಿ, ಅರಿವುವಿಡಿದು ಸಲಿಸುವುದೇ ಸಮತಾಪ್ರಸಾದ. ಶ್ರೀಗುರುವಿನ ಪ್ರಸನ್ನತ್ವವೆ ಜ್ಞಾನಪ್ರಸಾದ. ಇಂತೀ ಏಕದಶ ಪ್ರಸಾದವನು ಒಳಹೊರಗೆ ಪರಿಪೂರ್ಣಮಾಗಿ ತಿಳಿಯುವುದೆ ಶಿವತಂತ್ರ, ಗುರುಶಾಂತೇಶ್ವರಾ.
--------------
ದಸರಯ್ಯಗಳ ಪುಣ್ಯಸ್ತ್ರೀ ವೀರಮ್ಮ
ಐಶ್ವರ್ಯದಿಂದ ಶರೀರವು ಪ್ರಕಾಶಿಸುತ್ತಿರ್ಪುದು, ಮನಸ್ಸಿನಿಂದ ಜೀವನು ಪ್ರಕಾಶಿಸುತ್ತಿರ್ಪನು, ಶರೀರದ ಸುಖದುಃಖಂಗಳಿಗೆ ಐಶ್ವರ್ಯವೇ ಕಾರಣಮಾಗಿರ್ಪಂತೆ, ಜೀವನ ಸುಖದುಃಖಕ್ಕೆ ಮನಸ್ಸೇ ಕಾರಣಮಾಗಿರ್ಪುದು. ಅರ್ಥವಂ ಪ್ರಪಂಚಮುಖದಲ್ಲಿ ವೆಚ್ಚಿಸಿ, ಅರ್ಥಕ್ಕೆ ತಕ್ಕ ಉಪಾಂಗವಂ ಸಂಪಾದಿಸಿ, ತದುಪಭೋಗಯುಕ್ತಮಾಗಿರ್ಪ ಶರೀರದಂತೆ ಮನಸ್ಸನ್ನು ಕರ್ಮಮುಖದಲ್ಲಿ ವೆಚ್ಚಿಸಿ, ಆ ಮನಸ್ಸನ್ನಟ್ಟಿ, ಸೂಕ್ಷ್ಮಶರೀರವಂ ಸಂಪಾದಿಸುತ್ತಾ ಅದರಲ್ಲಿ ಜೀವನನುಭವಿಸುತ್ತಿಹನು. ಪ್ರಾಣವು ಶರೀರದಲ್ಲಿ ಬದ್ಧಮಾಗಿರ್ಪುದು, ಅರ್ಥದಲ್ಲಿ ಮನಸ್ಸು ಬದ್ಧಮಾಗಿಹುದು, ಜಡರೂಪಮಾದೈಶ್ವರ್ಯವು ಶರೀರವಂ ಹೊಂದಿ, ತಾನು ಚೈತನ್ಯರೂಪಮಾಗಿ ಸಕಲಪದಾರ್ಥಗಳನ್ನು ಶರೀರಮುಖಕ್ಕೊದಗಿಸಿಕೊಡುವಂತೆ ಜಡರೂಪಮಾದ ಮನಸ್ಸು ಜೀವನಂ ಹೊಂದಿದಲ್ಲಿ, ಆ ಜೀವನಿಗೂ ಪರಮಚೈತನ್ಯವಿತ್ತು. ತಾನು ಚೈತನ್ಯರೂಪಮಾಗಿ ಸಂಚರಿಸುತ್ತಾ, ಅನುಭವಯೋಗ್ಯವಾದ ಪದಾರ್ಥಂಗಳನ್ನು ಜೀವನಿಗೆ ಸಂಪಾದಿಸಿಕೊಡುತ್ತಿರ್ಪುದು. ಸಕಲಪ್ರಪಂಚವು ಅರ್ಥವಿದ್ದಲ್ಲಿ ಸೇರಿ, ಆ ಅರ್ಥವನ್ನೇ ಜೀವನವಂ ಮಾಡಿಕೊಂಡಿರ್ಪಂತೆ, ಸಕಲಗುಣಂಗಳು ಮನಸ್ಸನ್ನೇ ಸೇರಿ, ಆ ಮನಸ್ಸನ್ನೇ ಜೀವನವಂ ಮಾಡಿಹನು. ಆ ಅರ್ಥವುಳ್ಳ ಪುರುಷನು ಸಕಲರಿಗೂ ತಾನೂ ಪ್ರಭುವಾಗಿರ್ಪಂತೆ, ಮನಸ್ಸುಳ್ಳ ಜೀವನು ಸಕಲಗುಣಂಗಳಿಗೂ ತಾನೇ ಸ್ವಾಮಿಯಾಗಿರ್ಪನು. ಹೊನ್ನಿನಿಂದ ಹೆಣ್ಣನ್ನೂ ಹೆಣ್ಣಿನಿಂದ ಮಣ್ಣನ್ನು ಸಾಧಿಸಿ, ಆ ಹೆಣ್ಣು ಮಣ್ಣುಗಳಿಂದ ಹೊನ್ನಂ ಸಾಧಿಸುವಂತೆ, ಮನದಿಂದ ಅಹಂಬುದ್ಧಿಯು, ಅಹಂಬುದ್ಧಿಯಿಂ ಮನಸ್ಸು ಸಾಧ್ಯಮಪ್ಪದು. ಐಶ್ವರ್ಯವಿಲ್ಲದೆ ಶರೀರಮೋಕ್ಷ, ಮನಸ್ಸಿಲ್ಲದೆ ಜೀವನ್ಮುಕ್ತಿ. ಇಂತಪ್ಪ ವಿಚಿತ್ರವನ್ನು ಗುರುಮುಖದಿಂದ ತಿಳಿದ ಮಹಾಪುರುಷನು ಜಂಗಮರೂಪಿಯಾದ ನಿನಗೆ ಇಂದ್ರಿಯಮುಖದಲ್ಲರ್ಥವನ್ನು ಸಮರ್ಪಿಸಿ, ಲಿಂಗರೂಪಿಯಾದ ನಿನಗೆ ಭಾವಮುಖದಲ್ಲಿ ಮನಸ್ಸನ್ನು ಸಮರ್ಪಿಸಿದಲ್ಲಿ. ಆ ಲಿಂಗವೇ ಪ್ರಾಣಮಪ್ಪುದು. ಅರ್ಥವಂಚನೆಯೂ ಮನೋವಂಚನೆಯೂ ಲಿಂಗಜಂಗಮಮುಖದಲ್ಲಿ ಲಯಮಪ್ಪುದೇ ಲಿಂಗೈಕ್ಯ ಕಾಣಾ ಮಹಾಘನ ದೊಡ್ಡದೇಶಿಕಾರ್ಯಗುರುಪ್ರಭುವೆ.
--------------
ಮುಮ್ಮಡಿ ಕಾರ್ಯೇಂದ್ರ /ಮುಮ್ಮಡಿ ಕಾರ್ಯ ಕ್ಷಿತೀಂದ್ರ
ಗುರುಮುಖದಿಂದ ಕೊಂಬುದು ಶುದ್ಧಪ್ರಸಾದ. ಲಿಂಗಮುಖದಿಂದ ಕೊಂಬುದು ಸಿದ್ಧಪ್ರಸಾದ. ಜಂಗಮಮುಖದಿಂದ ಕೊಂಬುದು ಪ್ರಸಿದ್ಧಪ್ರಸಾದ. ಜ್ಞಾನಮುಖದಿಂದ ಕೊಂಬುದು ಮಹಾಪ್ರಸಾದ. ಈ ನಾಲ್ಕು ತೆರದಲ್ಲಿ ಕೊಂಬುವುದು ಪ್ರಸಾದವಲ್ಲದೆ ರಣದ ಬೀರರ ಹಾಂಗೆ ಬಾಚಿಸಿಕೊಂಡು ಕೊಂಬಷ್ಟ ಕೊಂಡು, ಬಿಡುವಷ್ಟ ಬಿಟ್ಟು ಸೂರೆಗೂಳಾಗಿ ಚೆಲ್ಲಿಯಾಡುವುದು ಇದಾವ ಪ್ರಸಾದ ಹೇಳ? ಅದೆಂತೆಂದೊಡೆ: ಅಣುಮಾತ್ರ ಪ್ರಸಾದಾನ್ನಂ ತ್ಯಕ್ತ್ವಾ ಭುಕ್ತಾನ್ನ ಕಿಲ್ಬಿಷಂ| ಸ ಪಾಪೀ ನರಕಂ ಯಾತಿ ತದ್ಗ ೃಹಂ ನರಕಾಲಯಂ|| ಎಂದುದಾಗಿ ಬಹು ಜನಂಗಳು ಕಾರಿದ ಕೂಳ ಶ್ವಾನ ಭುಂಜಿಸಿ ತನ್ನೊಡಲ ಹೊರೆದಂತಾಯಿತ್ತು ಕಾಣಾ ವಿಶ್ವಾಸವಿಲ್ಲದ ಪ್ರಸಾದ, ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.
--------------
ತೋಂಟದ ಸಿದ್ಧಲಿಂಗ ಶಿವಯೋಗಿಗಳು
ಲಿಂಗಮುಖದಿಂದ ಬಂದುದು ಶುದ್ಧ ಪ್ರಸಾದ ಜಂಗಮಮುಖದಿಂದ ಬಂದುದು ಸಿದ್ಧಪ್ರಸಾದ ಗುರುಮುಖದಿಂದ ಬಂದುದು ಪ್ರಸಿದ್ಧಪ್ರಸಾದ. ಅದೆಂತೆಂದಡೆ: ಲಿಂಗಂಚ ಇಷ್ಟರೂಪಂತು ಜಂಗಮಪ್ರಾಣಲಿಂಗಕಂ ಭಾವಲಿಂಗಂ ಗುರೋರ್ಲಿಂಗಂ ತ್ರಿವಿಧಂಚೇಕಮುಚ್ಯತೇ ಶುದ್ಧಂ ಲಿಂಗಮುಖಂ ತ್ಯಕ್ತ್ವಾ ಸಿದ್ಧಂ ಚರವಿಸರ್ಜಿತಃ ಪ್ರಸಿದ್ಧಂ ಚ ಗುರೋರ್ಭುಕ್ತಂ ಇತ್ಯೇತತ್ರಿವಿಧಂ ಸ್ಮೃತಂ ಎಂದುದಾಗಿ, ಶುದ್ಧ ಸಿದ್ಧ ಪ್ರಸಿದ್ಧ ಪ್ರಸಾದತ್ರಯದಲ್ಲಿ ಅವಧಾನಿ ಕೂಡಲಚೆನ್ನಸಂಗಾ ನಿಮ್ಮ ಶರಣ
--------------
ಚನ್ನಬಸವಣ್ಣ
-->