ಅಥವಾ

ಒಟ್ಟು 22 ಕಡೆಗಳಲ್ಲಿ , 15 ವಚನಕಾರರು , 22 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಹಿಂದೆ ನೀ ಬಂದೆ ನಾನಾ ಭವಂಗಳಲ್ಲಿ, ನಾನಾ ವ್ಯಾಪಾರಕ್ಕೆ ನೀನೊಡೆಯನಾಗಿ. ಮತ್ರ್ಯದ ಸುಖದುಃಖ ನಿನಗೆ ನಿಶ್ಚಿಂತವಾಗಿಪ್ಪುದು. ಹಿಂದೆ ನಿನ್ನಂತೆ ನಾ ಬಂದು ನೊಂದುದಿಲ್ಲ. ಬಂದೆ ನಾ ಬಸವಣ್ಣನ ಕಥನದಿಂದ, ನಾ ತಂದ ಪದಾರ್ಥವೆಲ್ಲವ ನಿಮಗಿತ್ತೆ. ನಾನಿನ್ನಂಜುವೆ ಗುರುಲಿಂಗಜಂಗಮದಲ್ಲಿ ಪ್ರತ್ಯುತ್ತರಕ್ಕೆ. ಎನಗೆ ಮತ್ರ್ಯದ ಮಣಿಹ, ಕೃತ್ಯವಿನ್ನೆಷ್ಟು ದಿನ ಹೇಳಾ. ಅಂದು ನೀವು ಕೊಟ್ಟ ಒಪ್ಪದ ಚೀಟನೊಪ್ಪಿಸಿದೆ. ಮತ್ತೆ ಇನ್ನು ಸಂದೇಹವೆ, ಹೇಳಾ ನಿಃಕಳಂಕ ಮಲ್ಲಿಕಾರ್ಜುನಾ.
--------------
ಮೋಳಿಗೆ ಮಾರಯ್ಯ
ಅಂಗದ ಮೇಲೆ ಶಿವಲಿಂಗ ನೆಲಸುವಂಗೆ ಮೂರುಸ್ಥಲವಾಗಬೇಕು. ಅವಾವವಯ್ಯಾಯೆಂದಡೆ: ಗುರುಲಿಂಗಜಂಗಮದಲ್ಲಿ ಭಕ್ತಿ. ಅರಿವ ಸಾದ್ಥಿಸುವಲ್ಲಿ ಜ್ಞಾನ. ಕರಣಾದಿಗಳ ಭಂಗ ವೈರಾಗ್ಯ. ಇನಿತಿಲ್ಲದೆ ಲಿಂಗವ ಪೂಜಿಸಿಹೆನೆಂಬ, ಲಿಂಗವ ಧರಿಸಿಹೆನೆಂಬ ಲಜ್ಜೆಭಂಡರ ಕಂಡು, ನಾ ನಾಚಿದೆನಯ್ಯಾ. ಇದು ಕಾರಣ ಗದ್ದುಗೆಗೆಟ್ಟು ಎದ್ದಾತನು ಲಿಂಗವಲ್ಲ ಕಾಣಾ. ಲಿಂಗ ಸತ್ತ, ನಾ ಕೆಟ್ಟೆ, ರಂಡೆಗೂಳೆನಿಸಲಾರೆ. ಎನ್ನ ಹತ್ಯವ ಮಾಡಾ, ನಿಃಕಳಂಕ ಮಲ್ಲಿಕಾರ್ಜುನಾ.
--------------
ಮೋಳಿಗೆ ಮಾರಯ್ಯ
ಅಯ್ಯಾ, ಕ್ರಿಯಾವಿಭೂತಿಯ ಧರಿಸಿದ ಭಕ್ತನು ಚಿದ್ರುದ್ರಾಕ್ಷಿಯ ಧರಿಸಿ ಮಂತ್ರಧ್ಯಾನವ ಮಾಡಬೇಕಾದ ನಿಮಿತ್ತ, ಪ್ರಥಮದಲ್ಲಿ ರುದ್ರಾಕ್ಷಿಮಣಿಗಳ ಕ್ರಮವ ಮಾಡದೆ, ಅವರು ಹೇಳಿದಂತೆ ಕ್ರಯವ ಕೊಟ್ಟು ಮುಖಭಿನ್ನವಾದುದನುಳಿದು, ಸ್ವಚ್ಛವಾದ ರುದ್ರಾಕ್ಷಿಗಳ ಶ್ರೀಗುರುಲಿಂಗಜಂಗಮದ ಸನ್ನಿಧಿಗೆ ತಂದು ವೃತ್ತಸ್ಥಾನದ ಪರಿಯಂತರವು ಧೂಳಪಾದೋದಕವ ಮಾಡಿ, ಆ ರುದ್ರಾಕ್ಷಿಯ ಪೂರ್ವಾಶ್ರಯವ ಕಳೆದು, ಲಿಂಗಧಾರಕಭಕ್ತರಿಂದ ಗುರುಪಾದೋದಕ ಮೊದಲಾಗಿ ಶಿವಪಂಚಾಮೃತದಿಂದ ಇಪ್ಪತ್ತೊಂದು ಪೂಜೆಯ ಮಾಡಿಸಿ ಆಮೇಲೆ ಶ್ರೀಗುರುಲಿಂಗಜಂಗಮದ ಪಾದಪೂಜೆಗೆ ಧರಿಸಿ, ಆಮೇಲೆ ಲಿಂಗಜಂಗಮಕ್ಕೆ ಸಮರ್ಪಿಸಿ, ಅವರಿಂದ ದಯಚಿತ್ತವ ಪಡೆದು, ಶರಣುಹೊಕ್ಕು ಮಹಾಪ್ರಸಾದವೆಂದು ಬೆಸಗೊಂಡು, ಆ ಕರುಣಾಕಟಾಕ್ಷ ಮಾಲೆಗಳ ಭಿನ್ನವಿಟ್ಟು ಅರ್ಚಿಸದೆ, ಅಭಿನ್ನಸ್ವರೂಪು ಮುಂದುಗೊಂಡು ಬಹುಸುಯಿಧಾನದಿಂದ ತನ್ನ ತೊಡೆಯ ಮೇಲೆ ಮೂರ್ತವ ಮಾಡಿಕೊಂಡು, ತನ್ನ ಜ್ಞಾನಪ್ರಕಾಶವೆಂದು ಭಾವಿಸಿ ತನ್ನ ತಾನರ್ಚಿಸಿ, ಮಂತ್ರಧ್ಯಾನಾರೂಢನಾಗಿ ತತ್ತತ್ ಸ್ಥಾನದಲ್ಲಿ ಧರಿಸುವುದಯ್ಯಾ. ಇಂತು ವಿಭೂತಿ ರುದ್ರಾಕ್ಷಿಯ ಧರಿಸಿ ಲಿಂಗನಿಷ್ಠಾಪರನಾದ ಭಕ್ತನು ಸ್ಥಲಮೆಟ್ಟಿಗೆಯಿಂದ ಆಯಾಯ ಮಂತ್ರವ ಹೇಳುವುದಯ್ಯಾ. ಅದರ ವಿಚಾರವೆಂತೆಂದಡೆ: ಕ್ರಿಯಾದೀಕ್ಷಾಯುಕ್ತನಾದ ಉಪಾಧಿಭಕ್ತಂಗೆ ಗುರುಮಂತ್ರವ ಹೇಳುವುದಯ್ಯಾ. ಕ್ರಿಯಾದೀಕ್ಷೆಯ ಪಡೆದು ಗುರುಲಿಂಗಜಂಗಮದಲ್ಲಿ ಅರ್ಥಪ್ರಾಣಾಭಿಮಾನಂಗ? ನಿರ್ವಂಚಕತ್ವದಿಂದ ಸಮರ್ಪಿಸಿ ನಡೆನುಡಿ ಸಂಪನ್ನನಾದ ನಿರುಪಾಧಿಭಕ್ತಂಗೆ ಲಿಂಗಮಂತ್ರವ ಹೇ?ುವುದಯ್ಯಾ ಇವರಿಬ್ಬರ ಆಚರಣೆಯ ಪಡೆದು ಸಮಸ್ತ ಭೋಗಾದಿಗಳು ನೀಗಿಸಿ ಸಚ್ಚಿದಾನಂದನಾದ ಸಹಜಭಕ್ತಂಗೆ ಜಂಗಮಮಂತ್ರವ ಹೇ?ುವುದಯ್ಯಾ. ಆ ಮಂತ್ರಂಗಳಾವುವೆಂದಡೆ: ಶಕ್ತಿಪ್ರಣವ ಹನ್ನೆರಡು ಗುರುಮಂತ್ರವೆನಿಸುವುದಯ್ಯಾ, ಶಿವಪ್ರಣವ ಹನ್ನೆರಡು ಲಿಂಗಮಂತ್ರವೆನಿಸುವುದಯ್ಯಾ, ಶಿವಶಕ್ತಿರಹಿತವಾದ ಹನ್ನೆರಡು ಜಂಗಮಮಂತ್ರವೆನಿಸುವುದಯ್ಯಾ. ಇಂತು ವಿಚಾರದಿಂದ ಉಪಾಧಿ ನಿರುಪಾಧಿ ಸಹಜಭಕ್ತ ಮಹೇಶ್ವರರಾಚರಿಸುವುದಯ್ಯಾ. ಇನ್ನು ನಿರಾಭಾರಿ ವೀರಶೈವನಿರ್ವಾಣ ಸದ್ಭಕ್ತಜಂಗಮಗಣಂಗಳು ಶುದ್ಧಪ್ರಸಾದಪ್ರಣವ ಹನ್ನೆರಡು, ಸಿದ್ಧಪ್ರಸಾದಪ್ರಣವ ಹನ್ನೆರಡು, ಪ್ರಸಿದ್ಧಪ್ರಸಾದಪ್ರಣವ ಹನ್ನೆರಡು, ಇಂತು ವಿಚಾರದಿಂದ ಮೂವತ್ತಾರು ಪ್ರಣವವನೊಡಗೂಡಿ, ಶುದ್ಧಪ್ರಸಾದಪ್ರಣವ ಆಚಾರಲಿಂಗ ಗುರುಲಿಂಗ ಇಷ್ಟಲಿಂಗ ಪರಿಯಂತರ ತ್ರಿವಿಧ ಲಿಂಗಕ್ಕೆಂದು ಮಾಡುವುದಯ್ಯಾ. ಸಿದ್ಧಪ್ರಸಾದಪ್ರಣವ ಶಿವಲಿಂಗ ಜಂಗಮಲಿಂಗ ಪ್ರಾಣಲಿಂಗ ಪರಿಯಂತರ ತ್ರಿವಿಧಲಿಂಗಕ್ಕೆಂದು ಮಾಡುವುದಯ್ಯಾ. ಪ್ರಸಿದ್ಧಪ್ರಸಾದಪ್ರಣವ ಪ್ರಸಾದಲಿಂಗ ಮಹಾಲಿಂಗ ಭಾವಲಿಂಗ ಪರಿಯಂತರ ತ್ರಿವಿಧಲಿಂಗಕ್ಕೆಂದು ಮಾಡುವುದಯ್ಯಾ. ಹೀಗೆ ಹರುಕಿಲ್ಲದೆ ಸ್ಥಲಮೆಟ್ಟಿಗೆಯಿಂದ ಕರುಣಿಸಿದ ಗುರುವಿಂಗೆ ಬೆಸಗೊಂಡ ಶಿಷ್ಯೋತ್ತಮಂಗೆ. ಆಯಾಯ ಲಿಂಗಪ್ರಸಾದ ಒದಗುವುದೆಂದಾಂತ ನಮ್ಮ ಕೂಡಲಚೆನ್ನಸಂಗಮದೇವ
--------------
ಚನ್ನಬಸವಣ್ಣ
ಕಾಮವಿಲ್ಲ ಭಕ್ತಂಗೆ ಪರಸ್ತ್ರೀಯರ ಮೇಲೆ. ಕ್ರೋಧವಿಲ್ಲ ಭಕ್ತಂಗೆ ಗುರುಲಿಂಗಜಂಗಮದಲ್ಲಿ. ಲೋಭವಿಲ್ಲ ಭಕ್ತಂಗೆ ಹೊನ್ನು ಹೆಣ್ಣು ಮಣ್ಣಿನಲ್ಲಿ. ಮೋಹವಿಲ್ಲ ಭಕ್ತಂಗೆ ತನುಮನಧನದಲ್ಲಿ. ಮದವಿಲ್ಲ ಭಕ್ತಂಗೆ ಸಜ್ಜನಸದ್ಭಾವಿಗಳಲ್ಲಿ. ಮತ್ಸರವಿಲ್ಲ ಭಕ್ತಂಗೆ ಯಾಚಕರ ಮೇಲೆ. ಇಂತು ಷಡ್ಗುಣವಿರಹಿತನಾದ ಭಕ್ತನಲ್ಲಿ ಸನ್ನಿಹಿತನಾಗಿರುವ ನಮ್ಮ ಗುರುನಿರಂಜನ ಚನ್ನಬಸವಲಿಂಗ.
--------------
ದೇಶಿಕೇಂದ್ರ ಸಂಗನಬಸವಯ್ಯ
ಶಿವನ ಕೂಡಿರ್ಪ ಶರಣರ ಶೀಲವನೇನೆಂಬೆನಯ್ಯಾ ! ನೀರು ನೀರ, ಕ್ಷೀರವು ಕ್ಷೀರ ಬೆರೆದಂತೆ. ತನುಮನಧನಂಗಳು ಗುರುಲಿಂಗಜಂಗಮದಲ್ಲಿ ಭರಿತವಾದ ಮಹಾಶರಣರ ನೀವೇ ಬಲ್ಲಿರಯ್ಯಾ ಅಖಂಡೇಶ್ವರಾ.
--------------
ಷಣ್ಮುಖಸ್ವಾಮಿ
ಹಸಿವು ತೃಷೆ ವಿಷಯ ಕಾಮ ಕ್ರೋಧ ಲೋಭ ಮೋಹ ಮದ ಮತ್ಸರವಾದಿಯಾದ ತನುಗುಣಂಗಳು ದೇವ ದಾನವ ಮಾನವರಂತೆ ಆದಡೆ, ಲಿಂಗವಂತನೆಂಬ ಪರಿಯೆಂತಯ್ಯಾ? ತನುಗುಣಂಗಳು ಭೂತದೇಹಿಗಳಂತಾದಡೆ ಲಿಂಗದೇಹಿಕನೆಂಬ ಪರಿಯೆಂತಯ್ಯಾ? ಲಿಂಗಚಿಹ್ನವಿಲ್ಲದಡೆ ಲಿಂಗದೇಹಿಯೆಂಬ ಪರಿಯೆಂತಯ್ಯಾ? ಹಸಿವು ತೃಷೆ ವಿಷಯ ವ್ಯಸನವಡಗಿದಡೆ ಲಿಂಗಚಿಹ್ನೆ. ಕ್ರೋಧ ಲೋಭ ಮೋಹ ಮದ ಮತ್ಸರ ಇವಾದಿಯಾದ ದೇಹಗುಣಂಗಳಳಿದಡೆ ಲಿಂಗಚಿಹ್ನೆ. ದೇಹಗುಣಭರಿತನಾಗಿ ಲಿಂಗದೇಹಿ ಎಂದಡೆ, ಲಿಂಗವಂತರು ನಗುವರಯ್ಯಾ. ಅಂಗಗುಣವಳಿದು ಗುರುಲಿಂಗಜಂಗಮದಲ್ಲಿ ತನು ಮನ ಧನ ಲೀಯವಾದಡೆ ಆತನು ಸರ್ವಾಂಗಲಿಂಗಿಯಯ್ಯಾ, ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರ.
--------------
ಉರಿಲಿಂಗಪೆದ್ದಿ
ನಾನಾ ವ್ರತದ ಭಾವಂಗಳುಂಟು. ಲಕ್ಷಕ್ಕೆ ಇಕ್ಕಿಹೆನೆಂಬ ಕೃತ್ಯದವರುಂಟು. ಬಂದಡೆ ಮುಯ್ಯಾಂತು ಬಾರದಿದ್ದಡೆ ಭಕ್ತರು ಜಂಗಮವ ಆರನೂ ಕರೆಯೆನೆಂಬ ಕಟ್ಟಳೆಯವರುಂಟು. ತಮ್ಮ ಕೃತ್ಯವಲ್ಲದೆ ಮತ್ತೆ ಬಂದಡೆ ಕತ್ತಹಿಡಿದು ನೂಕುವರುಂಟು. ಗುರುಲಿಂಗಜಂಗಮದಲ್ಲಿ ತಪ್ಪಕಂಡಡೆ ಒಪ್ಪುವರುಂಟು. ಮೀರಿ ತಪ್ಪಿದಡೆ ಅರೆಯಟ್ಟಿ ಅಪ್ಪಳಿಸುವರುಂಟು. ಇಂತೀ ಶೀಲವೆಲ್ಲವು ನಾವು ಮಾಡಿಕೊಂಡ ಕೃತ್ಯದ ಭಾವಕೃತ್ಯ. ತಪ್ಪಿದಲ್ಲಿ ದೃಷ್ಟವ ಕಂಡು ಶರಣರೆಲ್ಲರು ಕೂಡಿ ತಪ್ಪ ಹೊರಿಸಿದ ಮತ್ತೆ ಆ ವ್ರತವನೊಪ್ಪಬಹುದೆ ! ಕೊಪ್ಪರಿಗೆಯಲ್ಲಿ ನೀರ ಹೊಯಿದು ಅಪೇಯವ ಅಪ್ಪುವಿನಲ್ಲಿ ಕದಡಿ ಅಶುದ್ಧ ಒಪ್ಪವಿಲ್ಲವೆಂದು ಮತ್ತೆ ಕುಡಿಯಬಹುದೆ? ತಪ್ಪದ ನೇಮವನೊಪ್ಪಿ ತಪ್ಪ ಕಂಡಲ್ಲಿ ಬಿಟ್ಟು ಇಂತೀ ಉಭಯಕ್ಕೆ ತಪ್ಪದ ಗುರು ವ್ರತಾಚಾರಕ್ಕೆ ಕರ್ತನಾಗಿರಬೇಕು. ಇಂತೀ ಕಷ್ಟವ ಕಂಡು ದ್ರವ್ಯದಾಸೆಗೆ ಒಪ್ಪಿದನಾದಡೆ ಅವನೂಟ ಸತ್ತನಾಯಮಾಂಸ. ನಾ ತಪ್ಪಿ ನುಡಿದೆನಾದಡೆ ಎನಗೆ ಎಕ್ಕಲನರಕ. ನಾ ಕತ್ತಲೆಯೊಳಗಿದ್ದು ಅಂಜಿ ಇತ್ತ ಬಾ ಎಂಬವನಲ್ಲ. ವ್ರತ ತಪ್ಪಿದವರಿಗೆ ನಾ ಕಟ್ಟಿದ ತೊಡರು. ಎನ್ನ ಪಿಡಿದಡೆ ಕಾದುವೆ, ಕೇಳಿದಡೆ ಪೇಳುವೆ. ಎನ್ನಾಶ್ರಯದ ಮಕ್ಷಿಕ ಮೂಷಕ ಮಾರ್ಜಾಲ ಗೋ ಮುಂತಾದ ದೃಷ್ಟದಲ್ಲಿ ಕಾಂಬ ಚೇತನಕ್ಕೆಲ್ಲಕ್ಕೂ ಎನ್ನ ವ್ರತದ ಕಟ್ಟು. ಇದಕ್ಕೆ ತಪ್ಪಿದೆನಾದಡೆ ನಿಮ್ಮಾಣೆ ನಿಮ್ಮ ಪ್ರಮಥರಾಣೆ. ಆಚಾರವೆ ಪ್ರಾಣವಾದ ರಾಮೇಶ್ವರಲಿಂಗವೆ ಎಚ್ಚತ್ತು ಬದುಕು.
--------------
ಅಕ್ಕಮ್ಮ
ಮನವ ನಿಲಿಸಿಹೆನೆಂದು, ಆ ಮನದ ನೆಲೆಯ ಕಾಣದೆ, ಅರುಹು ಮರವೆಗೊಳಗಾಗಿ, ಕಳವಳವ ಮುಂದುಮಾಡಿ, ಚಿಂತೆ ಸಂತೋಷವನೊಡಲುಮಾಡಿ, ಭ್ರಾಂತುಗೊಂಡು ತಿರುಗುವ ಮನುಜರಿರಾ, ನೀವು ಕೇಳಿರೊ. ಮನವ ನಿಲಿಸುವುದಕ್ಕೆ ಶರಣರ ಸಂಗಬೇಕು, ಜನನಮರಣವ ಗೆಲಬೇಕು. ಗುರುಲಿಂಗಜಂಗಮದಲ್ಲಿ ವಂಚನೆಯಿಲ್ಲದೆ, ಮನಸಂಚಲವ ಹರಿದು, ನಿಶ್ಚಿಂತವಾಗಿ ನಿಜವ ನಂಬಿ ಚಿತ್ತ ಸುಯಿದಾನವಾದಲ್ಲದೆ, ಮನದೊಳಗೆ ಲಿಂಗವು ಅಚ್ಚೊತ್ತಿದಂತಿರದೆಂದರು ಬಸವಣ್ಣನ ಶರಣರು, ನಮ್ಮ ಅಪ್ಪಣ್ಣಪ್ರಿಯ ಚೆನ್ನಬಸವಣ್ಣ.
--------------
ಹಡಪದಪ್ಪಣ್ಣಗಳ ಪುಣ್ಯಸ್ತ್ರೀ ಲಿಂಗಮ್ಮ
ಭಾಜನಕ್ಕೆ ಸರ್ವಾಂಗ ಮುಸುಕಿಟ್ಟಲ್ಲಿ ಸರ್ವವ್ಯಾಪಾರ ನಿರಸನವಾಗಿರಬೇಕು ; ಸರ್ವಸಂಗವನೊಲ್ಲದೆ ಇರಬೇಕು. ಒಡೆಯರು ಭಕ್ತರಲ್ಲಿ ನಿಗರ್ವಿಯಾಗಿ ಬಂದು ನಿಂದುದ ಜಂಗಮಲಿಂಗವ ಮುಂದಿರಿಸಿ, ಅವರು ಕೈಕೊಂಡು ಮಿಕ್ಕ ಪ್ರಸಾದವ ಲಿಂಗಕ್ಕೆ ಅರ್ಪಿತವ ಮಾಡಿ, ಗುರುಲಿಂಗಜಂಗಮದಲ್ಲಿ ಸಂದುಸಂಶಯವಿಲ್ಲದೆ ಆಚಾರವೆ ಪ್ರಾಣವಾಗಿ ನಿಂದುದು ರಾಮೇಶ್ವರಲಿಂಗದಂಗ.
--------------
ಅಕ್ಕಮ್ಮ
ಪಾದೋದಕ ಪ್ರಸಾದಗಳೆಂದೆಂಬಿರಿ, ಪಾದೋದಕ ಪ್ರಸಾದದ ಬಗೆಯ ಪೇಳ್ವೆ. ಗದ್ದುಗೆಯ ಮೇಲೆ ಗದ್ದುಗೆಯ ಹಾಕಿ, ಜಂಗಮಲಿಂಗಿಗಳ ಕರತಂದು ಕುಳ್ಳಿರಿಸಿ, ಧೂಪ ದೀಪ ಪತ್ರಿ ಪುಷ್ಪದಿಂದ ಪಾದಪೂಜೆಯ ಮಾಡಿ, ಕೆರೆ ಬಾವಿ ಹಳ್ಳ ಕೊಳ್ಳ ನದಿ ಮೊದಲಾದವುಗಳ ನೀರ ತಂದು- ಬ್ರಹ್ಮರಂಧ್ರದಲ್ಲಿರುವ ಸತ್ಯೋದಕವೆಂದು ಮನದಲ್ಲಿ ಭಾವಿಸಿ, ಆ ಜಂಗಮದ ಉಭಯಪಾದದ ಮೇಲೆರೆದು, ಪಾದೋದಕವೇ ಪರಮತೀರ್ಥವೆಂದು ಲಿಂಗ ಮುಂತಾಗಿ ಸೇವಿಸಿ, ನವಖಂಡಪೃಥ್ವಿಯಲ್ಲಿ ಬೆಳೆದ ಹದಿನೆಂಟು ಜೀನಸಿನ ಧಾನ್ಯವ ತಂದು, ಉದಕದಲ್ಲಿ ಹೆಸರಿಟ್ಟು, ಅಗ್ನಿಯಲ್ಲಿ ಪಾಕವಮಾಡಿ, ತಂದು ಜಂಗಮಕ್ಕೆ ಎಡೆಮಾಡಿ, ಜಂಗಮವು ತನ್ನ ಲಿಂಗಕ್ಕೆ ಅರ್ಪಿಸಿ ಸೇವಿಸಿದಬಳಿಕ ತಾವು ಪ್ರಸಾದವೇ ಪರಬ್ರಹ್ಮವೆಂದು ಭಾವಿಸಿ, ಕೊಂಡು ಸಲಿಸುವರಯ್ಯ. ಇಂತೀ ಕ್ರಮದಿಂದ ಕೊಂಬುದು ಪಾದೋದಕಪ್ರಸಾದವಲ್ಲ. ಇಂತೀ ಉಭಯದ ಹಂಗು ಹಿಂಗದೆ ಭವಹಿಂಗದು, ಮುಕ್ತಿದೋರದು. ಮತ್ತಂ, ಹಿಂದಕ್ಕೆ ಪೇಳಿದ ಕ್ರಮದಿಂದಾಚರಿಸಿ, ಗುರುಲಿಂಗಜಂಗಮದಲ್ಲಿ ಪಾದೋದಕ ಪ್ರಸಾದವ ಸೇವಿಸಬಲ್ಲವರಿಗೆ ಪ್ರಸಾದಿಗಳೆಂಬೆ. ಇಂತಪ್ಪವರಿಗೆ ಭವ ಹಿಂಗುವದು, ಮುಕ್ತಿಯೆಂಬುದು ಕರತಳಾಮಳಕವಾಗಿ ತೋರುವುದು. ಈ ಪಾದೋದಕದ ಭೇದವ ಬಸವಣ್ಣ ಚೆನ್ನಬಸವಣ್ಣ ಪ್ರಭುದೇವರು ಮುಖ್ಯವಾದ ಏಳುನೂರೆಪ್ಪತ್ತು ಪ್ರಮಥಗಣಂಗಳು ಬಲ್ಲರಲ್ಲದೆ ಮಿಕ್ಕಿನ ಜಡಮತಿ ಕಡುಪಾತಕರಾದ ಭಿನ್ನಭಾವ ಜೀವಾತ್ಮರೆತ್ತ ಬಲ್ಲರಯ್ಯ ಕಾಡನೊಳಗಾದ ಶಂಕರಪ್ರಿಯ ಚನ್ನ ಕದಂಬಲಿಂಗ ನಿರ್ಮಾಯಪ್ರಭುವೆ.
--------------
ಕಾಡಸಿದ್ಧೇಶ್ವರ
ಗುರುಲಿಂಗಜಂಗಮದಲ್ಲಿ ಬೆರಸಿ ದಾಸೋಹವ ಮಾಡುವಲ್ಲಿ, ಹೆಣ್ಣು ಹೊನ್ನು ಮಣ್ಣು ಇವೇ ಮೂಲ ಮೊದಲು. ಮಾಟ ಸ್ವಸ್ಥವಾದಲ್ಲಿ ಈ ಮೂರ ಮರೆಯಬೇಕು, ಅಮರೇಶ್ವರಲಿಂಗವನರಿಯಬೇಕು.
--------------
ಆಯ್ದಕ್ಕಿ ಮಾರಯ್ಯ
ಗುರುಲಿಂಗಜಂಗಮದಲ್ಲಿ ಅತ್ಯಂತ ಪ್ರೇಮಿಗಳೆಂದು ಪರರ ಮುಂದೆ ತಮ್ಮ ಬಿಂಕವ ತೋರುವರು. ತೋರಿದಂತೆ ಆಚರಣೆಯ ತೋರರು. ಅದೆಂತೆಂದಡೆ : ತನ್ನ ದೀಕ್ಷೋಪದೇಶವ ಮಾಡಿದಂಥ ಗುರು ಮನೆಗೆ ಬಂದರೆ ಮನ್ನಿಸರು. ನಯನುಡಿಯ ಮಾತನಾಡರು. ಒಂದು ಹೊನ್ನು ವಸ್ತ್ರವ ಬೇಡಿದರೆ ಇಲ್ಲೆಂಬರಲ್ಲದೆ ಕೊಟ್ಟು ಸಂತೋಷಪಡಿಸುವವರಿಲ್ಲ. ಗ್ರಾಮದ ಮಧ್ಯದಲ್ಲಿ ಆವನೊಬ್ಬ ಜಾತಿಹಾಸ್ಯಕಾರನು ಬಂದು, ಡೋಲು ಡಮಾಮಿಯ ಹೊಡೆದು, ಬೊಬ್ಬಿಯ ರವಸದಿಂದ ಮಣ್ಣವರಸಿ, ರಟ್ಟಿ ಮಂಡಿಯ ತಿಕ್ಕಿ, ತೊಡೆಯ ಚಪ್ಪರಿಸಿ, ಕೋ ಎಂದು ಕೂಗಿ, ಭೂಮಿಗೆ ಕೈ ಹಚ್ಚಿ, ಲಾಗದ ಮೇಲೆ ಲಾಗ ಹೊಡೆದು, ಅಂತರಪುಟಕಿಯಲ್ಲಿ ಮೂರು ಹೊರಳಿಕೆಯ ಹೊರಳಿ, ಮುಂದೆ ಬಂದು ನಿಂತು, ಮಜುರೆಯ ಮೇಲೆ ಮಜುರೆಯ ಹೊಡೆದು, ಅವರ ಹೆಸರೆತ್ತಿ ಕೊಂಡಾಡಲು, ಅವರ ಲಾಗಕ್ಕೆ ಮೆಚ್ಚಿ ಶಾಲು ಶಕಲಾತಿ ಮೊದಲಾದ ವಸ್ತ್ರವ ಕೊಟ್ಟು, ಕಾಲತೊಡರು ಮುಂಗೈಸರಪಳಿ ಛತ್ರ ಚಾಮರ ಜಲ್ಲಿ ಮೊದಲಾದ ಚಾಜವ ಕೊಟ್ಟು, ಸಂತೋಷಪಡಿಸುವರಲ್ಲದೆ ಇಲ್ಲೆಂಬರೇ? ಇಲ್ಲೆನ್ನರಯ್ಯ. ಮತ್ತಂ, ಲಿಂಗಪೂಜೆಯ ಮಾಡೆಂದಡೆ ಎನ್ನಿಂದಾಗದೆಂಬರು. ಲಿಂಗಕ್ಕೆ ಸಕಲಪದಾರ್ಥವನರ್ಪಿಸಿ ಸಲಿಸೆಂದಡೆ ಎನ್ನಿಂದಾಗದೆಂದು, ಬಂದ ಪದಾರ್ಥವ ಲಿಂಗಕ್ಕೆ ತೋರದೆ ಬಾಯಿಗೆಬಂದಂತೆ ತಿಂಬುವರು. ಜಟ್ಟಿಂಗ ಹಿರಿವಡ್ಯಾ ಲಕ್ಕಿ ದುರ್ಗಿ ಚಂಡಿ ಮಾರಿಯ ಪೂಜಿಸೆಂದಡೆ ತನುಮನವು ಹೊಳೆಯುಬ್ಬಿದಂತೆ ಉಬ್ಬಿ, ಹೊತ್ತಾರೆ ಎದ್ದು ಪತ್ರಿ ಪುಷ್ಪವ ತಂದು, ಒಂದೊತ್ತು ಉಪವಾಸ ಮಾಡಿ, ಮೈಲಿಗೆಯ ಕಳೆದು ಮಡಿಯನುಟ್ಟು, ಮನಪೂರ್ವಕದಿಂ ಪೂಜೋಪಚಾರವ ಮಾಡಿ, ಭೂಮಿಯಲ್ಲಿ ಕಾಯಕಷ್ಟವ ಮಾಡಿ ಬೆಳೆದಂಥ ಹದಿನೆಂಟು ಜೀನಸಿನ ಧಾನ್ಯವ ತಂದು ಪಾಕ ಮಾಡಿ, ಆ ದೇವತೆಗಳಿಗೆ ನೈವೇದ್ಯವ ಕೊಟ್ಟು, ಮರಳಿ ತಾವು ಉಂಬುವರಲ್ಲದೆ, ಅಂತಪ್ಪ ದೇವತೆಗಳಿಗೆ ಕೊಡದ ಮುನ್ನವೆ ಸಾಯಂಕಾಲಪರಿಯಂತರವಾದಡೂ ಒಂದು ಬಿಂದು ಉದಕ ಒಂದಗಳನ್ನವ ಕೊಳ್ಳದೆ, ತನು-ಮನ ಬಳಲಿಸುವರಯ್ಯಾ. ಮತ್ತಂ, ಜಂಗಮಲಿಂಗವು ಹಸಿವು ತೃಷೆ ಆಪ್ಯಾಯನವಾಗಿ ಮಧ್ಯಾಹ್ನ ಸಾಯಂಕಾಲದೊಳಗೆ ಭಿಕ್ಷಕ್ಕೆ ಬಂದಡೆ, ಅನುಕೂಲವಿಲ್ಲ, ಮನೆಯೊಳಗೆ ಹಡದಾರ ಗದ್ದಲುಂಟು ಮನೆಯೊಳಗೆ ಗೃಹಸ್ಥರು ಬಂದಾರೆ, ಘನಮಾಡಿಕೊಳ್ಳಿರಯ್ಯಾ ಮುಂದಕ್ಕೆ ಎಂಬರಲ್ಲದೆ, ಅಂತಪ್ಪ ಆಪ್ಯಾಯನವಾದ ಜಂಗಮವ ಕರೆದು ಅನ್ನೋದಕವ ನೀಡಿ, ತೃಪ್ತಿಯ ಬಡಿಸುವರೆ ? ಬಡಿಸುವದಿಲ್ಲ. ಊರೊಳಗೆ ಒಬ್ಬ ಜಾರಸ್ತ್ರೀಯಳು ಉಂಡು ವೀಳ್ಯವಕೊಂಡು ಸಹಜದಲ್ಲಿ ತಮ್ಮ ಗೃಹಕ್ಕೆ ಬಂದಲ್ಲಿ ಆ ಜಾರಸ್ತ್ರೀಗೆ ಮನೆಯವರೆಲ್ಲರು ಉಣ್ಣು ಏಳು ಉಂಬೇಳೆಂದು ಆಕೆಯ ಕರವ ಪಿಡಿದು ಕರೆವರಯ್ಯಾ. ಅವಳು ಎನಗೆ ಹಸುವಿಲ್ಲೆಂದು ತಮ್ಮ ಗೃಹಕ್ಕೆ ಹೋಗಲು, ಅವಳು ಹೋದಮೇಲೆ ದೇವರಿಗೆ ಎಡಿಯ ಕಳಿಸಿದಂತೆ ಕಳುಹುವರಯ್ಯ. ಇಂತಪ್ಪ ತ್ರಿವಿಧಭ್ರಷ್ಟ ಹೊಲೆ ಮಾದಿಗರಿಗೆ ಗುರು-ಲಿಂಗ-ಜಂಗಮದ ಪ್ರೇಮಿಗಳಾದ ಸದ್ಭಕ್ತರೆಂದಡೆ, ಶಿವಜ್ಞಾನಿಗಳಾದ ಶಿವಶರಣರು ಕಂಡು ತಮ್ಮೊಳಗೆ ತಾವೇ ನಕ್ಕು ಅರಿಯದವರಂತೆ ಶಬ್ದಮುಗ್ಧರಾಗಿ ಸುಮ್ಮನೆ ಇರ್ದರು ಕಾಣಾ ಕಾಡನೊಳಗಾದ ಶಂಕರಪ್ರಿಯ ಚನ್ನಕದಂಬಲಿಂಗ ನಿರ್ಮಾಯಪ್ರಭುವೆ.
--------------
ಕಾಡಸಿದ್ಧೇಶ್ವರ
ಗುರುಲಿಂಗಜಂಗಮದಲ್ಲಿ ಭಯ ಭಕ್ತಿ ಕರುಣ ಕಿಂಕುರ್ವಾಣ ನಯನುಡಿ ನಮಸ್ಕಾರ ಕ್ಷಮೆ ದಮೆ ಶಾಂತಿ ಸೈರಣೆ ದಯಾಗುಣ ವಿಶ್ವಾಸ ನಂಬುಗೆ ನಿಷೆ* ಸಮರಸವನುಳ್ಳ ಸದ್ಭಕ್ತರ ತೋರಿ ಬದುಕಿಸಯ್ಯ ಎನ್ನ ಅಖಂಡೇಶ್ವರಾ.
--------------
ಷಣ್ಮುಖಸ್ವಾಮಿ
ಕೇಳಿಕೊಂಡು ಸಗುಣ ನಿರ್ಗುಣ ಬೆಳಗಿನಿಂದಾಡುವ ಕಡುಜಾಣ ಕಲಿಗಳು ಬಡತನವ ಬೀರುವರಲ್ಲಯ್ಯಾ. ಜಡವಿಡಿದರೇನು ಕಡುಲೋಭಿಯಯ್ಯಾ. ಗುರುಲಿಂಗಜಂಗಮದಲ್ಲಿ ಪ್ರಾಣಾಂಗಭಾವ ತಪ್ಪದಿಪ್ಪುದು ಗುರುನಿರಂಜನ ಚನ್ನಬಸವಲಿಂಗದಲ್ಲಿ ಭಕ್ತನ ನಿಷೆ*.
--------------
ದೇಶಿಕೇಂದ್ರ ಸಂಗನಬಸವಯ್ಯ
ಭಕ್ತಂಗೆ ವಿಶ್ವಾಸ, ಗುರುಚರಕ್ಕೆ ವಿರಕ್ತಿ, ಭಕ್ತಂಗೆ ತ್ರಿವಿಧ ಕೂಡಿದ ಮಾಟ, ವಿರಕ್ತಂಗೆ ತ್ರಿವಿಧ ಹೊರಗಾಗಿ ಆಟ, ಭಕ್ತನ ನೆಮ್ಮುಗೆ ಗುರುಲಿಂಗಜಂಗಮದಲ್ಲಿ. ಗುರುಚರವಿರಕ್ತನ ನೆಮ್ಮುಗೆ ಸದಾಶಿವಮೂರ್ತಿಲಿಂಗದಲ್ಲಿ ಬೆಚ್ಚಂತಿರಬೇಕು.
--------------
ಅರಿವಿನ ಮಾರಿತಂದೆ
ಇನ್ನಷ್ಟು ... -->