ಅಥವಾ

ಒಟ್ಟು 142 ಕಡೆಗಳಲ್ಲಿ , 47 ವಚನಕಾರರು , 130 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಪಾದವಿಲ್ಲದ ಗುರುವಿಂಗೆ ತಲೆಯಿಲ್ಲದ ಶಿಷ್ಯನು. ಅನಾಚಾರಿ ಗುರುವಿಂಗೆ ವ್ರತಗೇಡಿ ಶಿಷ್ಯನು. ಈ ಗುರುಶಿಷ್ಯರಿಬ್ಬರೂ ಸತ್ತ ಸಾವ, ನಿಮ್ಮಲ್ಲಿ ಅರಸುವೆ ಗುಹೇಶ್ವರಾ.
--------------
ಅಲ್ಲಮಪ್ರಭುದೇವರು
ಗುರುವಿಂಗೆ ಜೀವಪ್ರಸಾದ, ಚರಕ್ಕೆ ಭಾವಪ್ರಸಾದ. ಜೀವಭಾವದಲ್ಲಿ ಕೂಡಲಿಕ್ಕಾಗಿ ಪರಮಪ್ರಸಾದ. ಆ ಪರಮಪ್ರಸಾದ ವ್ಯತಿರಿಕ್ತವಾಗಿ ಕಾಣಿಸಿಕೊಂಡಲ್ಲಿ ಪ್ರಸಾದವಾಯಿತ್ತು. ಆ ಲಿಂಗಪ್ರಸಾದ ತನಗಾಗಲಾಗಿ ಸ್ವಯಪ್ರಸಾದವಾಯಿತ್ತು. ಇಂತೀ ಪ್ರಸಾದಿಸ್ಥಲ ವಿವರಂಗಳ ತಿಳಿದು ಲಿಂಗಕ್ಕೆ ಕೊಟ್ಟು ಕೊಳಬೇಕು. ದಹನ ಚಂಡಿಕೇಶ್ವರಲಿಂಗಕ್ಕೆ ಅರಿದು ಅರ್ಪಿಸಬೇಕು.
--------------
ಪ್ರಸಾದಿ ಲೆಂಕಬಂಕಣ್ಣ
ಶಿವನೆ, ನೀನು ಗುರುವಾದೆ ಲಿಂಗವಾದೆ ಜಂಗಮವಾದೆ ಭಕ್ತನಾದೆ. ಗುರುವಾಗಿದ್ದು ಭಕ್ತನೊಳಡಗಿದೆ. ಅದೇನು ಕಾರಣವೆಂದಡೆ ಗುರುವಿಂಗೆ ಅರ್ಥಪ್ರಾಣಾಭಿಮಾನವನು ಕೊಟ್ಟು, ಆತ ಭೋಗಿಸಿದ ಬಳಿಕ ತಾನಾ ಪ್ರಸಾದ ಮುಂತಾಗಿ ಭೋಗಿಸುವನಾಗಿ, ಆ ಗುರುವು ತನ್ನೊಳಡಗಿದ. ಲಿಂಗವಾಗಿದ್ದು ಭಕ್ತನೊಳಡಗಿದೆ. ಅದೇನು ಕಾರಣವೆಂದಡೆ ಲಿಂಗಕ್ಕೆ ಅರ್ಥಪ್ರಾಣಾಭಿಮಾನವನು ಕೊಟ್ಟು, ಆತ ಭೋಗಿಸಿದ ಬಳಿಕ ತಾನಾ ಪ್ರಸಾದ ಮುಂತಾಗಿ ಭೋಗಿಸುವನಾಗಿ, ಆ ಲಿಂಗವು ಭಕ್ತನೊಳಡಗಿದ. ಜಂಗಮವಾಗಿದ್ದು ಭಕ್ತನೊಳಡಗಿದೆ. ಅದೇನು ಕಾರಣವೆಂದಡೆ ಜಂಗಮಕ್ಕೆ ಅರ್ಥಪ್ರಾಣಾಭಿಮಾನವನು ಕೊಟ್ಟು, ಆ ಜಂಗಮವು ಭೋಗಿಸಿದ ಬಳಿಕ ತಾನಾ ಪ್ರಸಾದ ಮುಂತಾಗಿ ಭೋಗಿಸುವನಾಗಿ, ಆ ಜಂಗಮವು ಭಕ್ತನೊಳಡಗಿದ. ಇಂತಡಗುವರೆ ಹಿರಿಯರು; ಇಂತಡಗುವರೆ ಗುರುವರು; ಇಂತಡಗುವರೆ ಮಹಿಮರು; ಇವರಿಗೆ ಭಾಜನವೊಂದೆ ಭೋಜನವೊಂದೆ. ಈ ನಾಲ್ಕು ಒಂದಾದ ಘನಕ್ಕೆ ಪರಿಯಾಣಬೇರೆಂಬ ಶಾಸ್ತ್ರದ ಸೂತಕಿಗಳನೆನಗೆ ತೋರದಿರಯ್ಯಾ, ಮಸಣಯ್ಯಪ್ರಿಯ ಗಜೇಶ್ವರಾ.
--------------
ಗಜೇಶಮಸಣಯ್ಯಗಳ ಪುಣ್ಯಸ್ತ್ರೀ
ದೀಕ್ಷೋಪದೇಶವ ಮಾಡಿ ಗುರುವಿನ ಕಣ್ಣ ಕಳೆದು ತಲೆ ಹೊಡೆದು ಮೂರು ಹಣವ ಕೊಂಡೆ. ದೀಕ್ಷೋಪದೇಶವ ಹಡೆದ ಭಕ್ತರ ನಾಲಗೆಯ ಕೊಯ್ದು ಕೈ ಮುರಿದು ಮೂರು ಹಣವ ಕೊಂಡೆ. ಈ ಗುರುಶಿಷ್ಯರುಭಯರ ಸಂಯೋಗಕಾಲದಲ್ಲಿರುವ ಸಾಕ್ಷಿಗಣಂಗಳ ಮನೆಯ ಸುಟ್ಟು ಮೂರು ರತ್ನವ ಕೊಂಡೆ. ಇಂತೀ ಮೂವರ ಹಣವ ತಂದು ಗುರುವಿಗೆ ಕೊಟ್ಟು ಕಾಯಕವ ಮಾಡುತ್ತಿರ್ದೆನಯ್ಯ ಕಾಡನೊಳಗಾದ ಶಂಕರಪ್ರಿಯ ಚನ್ನಕದಂಬಲಿಂಗ ನಿರ್ಮಾಯಪ್ರಭುವೆ.
--------------
ಕಾಡಸಿದ್ಧೇಶ್ವರ
ನಿನಗೆ ಮಜ್ಜನವ ಮಾಡುವಲ್ಲಿ, ನಾ ಮಲದೇಹಿ, ನೀ ನಿರ್ಮಲದೇಹಿ. ನಿನಗೆ ಪೂಜೆಯ ಮಾಡುವಲ್ಲಿ, ನಾ ಕರ್ಮಜೀವಿ, ನೀ ಪುಣ್ಯಜೀವಿ. ನಿನಗೆ ಗಂಧವ ಹೂಸುವಲ್ಲಿ, ನಾ ದುರ್ಗುಣ ಜೀವಿ, ನೀ ಸುಗಂಧ ಭಾವಿ. ನಿನಗೆ ಅಕ್ಷತೆಯನಿಕ್ಕುವಲ್ಲಿ, ನಾ ಲಕ್ಷಿತ, ನೀ ಅಲಕ್ಷಿತ. ನಿನಗೆ ಧೂಪವನಿಕ್ಕುವಲ್ಲಿ, ನಾ ಭಾವಿತ, ನೀ ನಿರ್ಭಾವಿತ. ನಿನಗೆ ದೀಪವನೆತ್ತುವಲ್ಲಿ, ನಾ ಜ್ಯೋತಿ, ನೀ ಬೆಳಗು. ಇಂತೀ ಭಾವಂಗಳಲ್ಲಿ ಭಾವಿಸಿ ಕಂಡೆಹೆನೆಂದಡೆ, ಭಾವಕ್ಕೆ ಅಗೋಚರನಾಗಿಪ್ಪೆ. ನಿನ್ನನರಿವುದಕ್ಕೆ ತೆರನಾವುದೆಂದಡೆ, ಗುರುವಿಂಗೆ ತನು, ನಿನಗೆ ಮನ, ಜಂಗಮಕ್ಕೆ ಧನ, ತ್ರಿವಿಧಕ್ಕೆ ತ್ರಿವಿಧವನಿತ್ತು, ದಗ್ಧಪಟದಂತೆ ರೂಪಿಗೆ ಹೊದ್ದಿಗೆಯಾಗಿ, ಕಲ್ಲಿಗೆ ಹೊದ್ದದಿಪ್ಪ ಲಿಂಗ ಸದ್ಭಕ್ತನ ಸ್ಥಲ. ಆ ಭಕ್ತನಲ್ಲಿ ತಪ್ಪದಿಪ್ಪೆ, ನಿಃಕಳಂಕ ಮಲ್ಲಿಕಾರ್ಜುನಾ.
--------------
ಮೋಳಿಗೆ ಮಾರಯ್ಯ
ಅಂಧಕನು ಓಡ ಹಿಡಿದು ಸ್ವರೂಪವ ತಾ ನೋಡುವಂತೆ, ಶೈವ ಗುರುವಿನಲ್ಲಿ ಲಿಂಗ ಸಾಹಿತ್ಯವಾದ ಶಿಷ್ಯನ ವಿಧಿಯ ನೋಡಿರೆ ! ಗುರುವಿಂಗೆ ದೂರಾರ್ಚನೆ ಶಿಷ್ಯಂಗೆ ಇಷ್ಟಲಿಂಗಾರ್ಚನೆ, ಗುರು ವಾಯುಪ್ರಾಣಿ, ಶಿಷ್ಯ ಲಿಂಗಪ್ರಾಣಿ, ಗುರು ಭೂತದೇಹಿ, ಶಿಷ್ಯ ಲಿಂಗದೇಹಿ, ಗುರು ಅನರ್ಪಿತಭುಂಜಕ, ಶಿಷ್ಯ ಲಿಂಗಾರ್ಪಿತಭುಂಜಕ, ಗುರು ಅಗ್ನಿದಹನಸಂಪತ್ತು, ಶಿಷ್ಯ ಸಿದ್ಧಸಮಾಧಿಸಂಪತ್ತು, ಎಂತುಂಟು ಹೇಳಿರಣ್ಣಾ ? ``ಜ್ಞಾನಹೀನಗುgõ್ಞ ಪ್ರಾಪ್ತೇ ಶಿಷ್ಯಜ್ಞಾನಂ ನ ಸಿಧ್ಯತಿ ಮೂಲಚ್ಛಿನ್ನೇ ಯಥಾ ವೃಕ್ಷೇ ಕಥಂ ಪುಷ್ಪಂ ಫಲಂ ಭವೇತ್ ಎಂದುದಾಗಿ ಇವರಿಬ್ಬರ ಗುರುಶಿಷ್ಯಸಂಬಂಧಕ್ಕೆ ನರಕ ತಪ್ಪದು ಕಾಣಾ ಕೂಡಲಚೆನ್ನಸಂಗಮದೇವಾ.
--------------
ಚನ್ನಬಸವಣ್ಣ
ಭಕ್ತನಾದಡೆ ಆರೂ ಅರಿಯದಂತೆ ಊರೆಲ್ಲರರಿಕೆಯಾಗಿ, ಗುರುವಿಂಗೆ ತನು, ಲಿಂಗಕ್ಕೆ ಮನ, ಜಂಗಮಕ್ಕೆ ಧನ, ಮಾಟವನರಿತು ಮಾಡುವ ಸತಿಯರ ಗಂಡ ನಾನು. ರಕ್ಕಸನೊಡೆಯ ಕೊಟ್ಟುದ ಬೇಡ
--------------
ರಕ್ಕಸಬೊಮ್ಮಿತಂದೆ / ರಕ್ಕಸ ಬ್ರಹ್ಮಯ್ಯ
ಅಹಂಕಾರವರತು ಗುರುವಾಗಿ, ಜಗವರತು ಲಿಂಗವಾಗಿ, ತ್ರಿವಿಧವರತು ಜಂಗಮವಾಗಿ, ಸಕಲೇಂದ್ರಿಯದ ಲಂಪಟವರತು ಭಕ್ತನಾಗಿ ಸಂಸಾರವೆಂಬ ಗಡಬಡೆಯಲ್ಲಿ ಸಿಲುಕದೆ, ಆವ ಸ್ಥಲದಲ್ಲಿ ನಿಂದು ನೋಡಿದಡೂ ಭಾವಶುದ್ಧವಾಗಿ ಗುರುವಿಂಗೆ ಗುರುವಾಗಿ, ಲಿಂಗಕ್ಕೆ ಲಿಂಗವಾಗಿ ಜಂಗಮಕ್ಕೆ ಜಂಗಮವಾಗಿ ಭಕ್ತರ ಯುಕ್ತಿಯ ಮಾರಿಕೊಂಡಿಪ್ಪ ಸದ್ಭಕ್ತ ಕಾಲಾಂತಕ ಬ್ಥೀಮೇಶ್ವರಲಿಂಗವು ತಾನೆ.
--------------
ಡಕ್ಕೆಯ ಬೊಮ್ಮಣ್ಣ
ಇಂತಪ್ಪ ನಿರ್ಣಯವನು ಸ್ವಾನುಭಾವ ಗುರುಮುಖದಿಂ ತಿಳಿದು ವಿಚಾರಿಸಿಕೊಳ್ಳದೆ, ಬ್ಥಿನ್ನಗುರುವಿನ ಕೈಯಲ್ಲಿ ಉಪದೇಶವ ಹಡದು, ಲಿಂಗವ ಪಡಕೊಂಡು ಗುರುಕಾರುಣ್ಯ ಉಳ್ಳವರೆಂದು ಲೋಕದ ಮುಂದೆ ಬೊಗಳುವ ಮೂಳಹೊಲೆಯರ ಕಟಬಾಯ ಸೀಳಿ ನಿಮ್ಮ ಗಣಂಗಳ ಪಾದರಕ್ಷೆಯಿಂದ ಹೊಡೆದಡೆ, ಎನ್ನ ಸಿಟ್ಟು ಮಾಣದು. ಅದೇನು ಕಾರಣವೆಂದಡೆ, ನೀವು ಪಡಕೊಂಡ ಗುರುವಿಗೆ ಗುರುಕಾರುಣ್ಯವಿಲ್ಲ. ಅವನ ಗುರುವಿಗೆ ಮುನ್ನವೇ ಗುರುಕಾರುಣ್ಯವಿಲ್ಲ. ನಿಮಗಿನ್ನಾವ ಕಡೆಯ ಗುರುಕಾರುಣ್ಯವೊ? ಎಲೆ ಮರುಳ ಮಾನವರಿರಾ ಗುರುಕಾರುಣ್ಯವಾದ ಬಳಿಕ ತನು-ಮನ-ಧನದಾಸೆ ಹಿಂದುಳಿದು ಗುರು-ಲಿಂಗ-ಜಂಗಮದಾಶೆ ಮುಂದುಗೊಂಡಿರಬೇಕು. ಗುರುಕಾರುಣ್ಯವಾದಡೆ ಆಣವಮಲ, ಮಾಯಾಮಲ, ಕಾರ್ಮಿಕಮಲಗಳ ಜರಿದು ಇಷ್ಟ-ಪ್ರಾಣ-ಭಾವದಲ್ಲಿ ಭರಿತವಾಗಬೇಕು. ಗುರುಕಾರುಣ್ಯವಾದಡೆ ಲಿಂಗವು ಆರಿಗೂ ತೋರದಿರಬೇಕು. ಇಷ್ಟುಳ್ಳಾತನೆ ಗುರುಕಾರುಣ್ಯ ಉಳ್ಳವನೆಂದನಯ್ಯಾ ನಿಮ್ಮ ಶರಣ ಕಾಡನೊಳಗಾದ ಶಂಕರಪ್ರಿಯ ಚನ್ನಕದಂಬಲಿಂಗ ನಿರ್ಮಾಯಪ್ರಭುವೆ.
--------------
ಕಾಡಸಿದ್ಧೇಶ್ವರ
ಗುರುಶಿಷ್ಯ ಸಂಬಂಧವನರಸುವ ಮಹಂತರ ನಾನೇನೆಂಬೆನಯ್ಯಾ; ಶಿಷ್ಯಂಗೆ ಗುರು ಶಿವಸೋದರ, ಗುರುವಿಂಗೆ ಲಿಂಗ ಶಿವಸೋದರ, ಲಿಂಗಕ್ಕೆ ಜಂಗಮ ಶಿವಸೋದರ, [ಜಂಗಮಕ್ಕೆ ಪ್ರಸಾದ ಶಿವಸೋದರ] ಪ್ರಸಾದಕ್ಕೆ ಪರಿಣಾಮವೆ ಶಿವಸೋದರ, ಇದು ಕಾರಣ, ಗುರುವಿನಲ್ಲಿ ಗುಣವ, ಲಿಂಗದಲ್ಲಿ ಸ್ಥಲವ (ಶಿಲೆಯ?) ಜಂಗಮದಲ್ಲಿ ಕುಲವ, ಪ್ರಸಾದದಲ್ಲಿ ರುಚಿಯ, ಪರಿಣಾಮದಲ್ಲಿ ಕುರುಹನರಸುವ ಪಾತಕರ ತೋರದಿರು ಕೂಡಲಚೆನ್ನಸಂಗಮದೇವಾ.
--------------
ಚನ್ನಬಸವಣ್ಣ
ಅರಿದು ನೆನೆಯಲಿಲ್ಲ, ಮರೆದು ಪೂಜಿಸಲಿಲ್ಲ. ತೆರಹಿಲ್ಲದ ಘನಕ್ಕೆ ಕುರುಹು ಮುನ್ನಿಲ್ಲ. ತನಗೆ ಗುರುವಿಲ್ಲ, ಗುರುವಿಗೆ ತಾನಿಲ್ಲ ಗುರುವಿಗೆ ಶಿಷ್ಯನು ಹೊಡವಡುವ ಕಾರಣ ಮುನ್ನಿಲ್ಲ. ಬಯಲ ಬಿತ್ತಲಿಲ್ಲ, ಬೆಳೆಯಲಿಲ್ಲ, ಒಕ್ಕಲಿಲ್ಲ, ತೂರಲಿಲ್ಲ, ಗುಹೇಶ್ವರನೆಂಬ ಲಿಂಗಕ್ಕೆ ಕುರುಹು ಮುನ್ನಿಲ್ಲ.
--------------
ಅಲ್ಲಮಪ್ರಭುದೇವರು
ಆದಿ ಲಿಂಗ, ಅನಾದಿ ಜಂಗಮವು, ಆ ಜಂಗಮಕ್ಕೆ ಮಾಡಿದಡೆ ಪರಮಾನಂದ ಸುಖವಯ್ಯಾ. ಗುರುವಿಂಗೆ ಪರಮಗುರು ಜಂಗಮವೆಂದುದು ಕೂಡಲಸಂಗಯ್ಯನ ವಚನ.
--------------
ಬಸವಣ್ಣ
ಆರು ನೆಲೆ ಮಂಟಪದ ಕೋಣೆಯಲ್ಲಿ ಆರು ಜ್ಯೋತಿಯ ಮುಟ್ಟಿಸಿ ಆ ಜ್ಯೋತಿಯ ಬೆಳಗಿನಲ್ಲಿ ಆರು ಲಿಂಗವ ನಿರ್ಮಿಸಿ ಆರು ಲಿಂಗದ ಪ್ರತುಮೆಯಲ್ಲಿ ಆರು ಹಂತದ ಸೋಪಾನದಲ್ಲಿ ಮಹಾ ನಿರ್ಮಳವೆಂಬ ದುರ್ಗಮಂ ನಿರ್ಮಿಸಿ ಆ ದುರ್ಗದಲ್ಲಿ ಅರಸಂಗೆ ಕಾಲಿಲ್ಲದಾಕೆಯ ಮದುವೆಯ ಮಾಡಿ ತೂತಿಲ್ಲದ ಭೋಗಕ್ಕೆ ಕೂಡಿ ಬಿಂದುವಿಲ್ಲದೆ ಮಕ್ಕಳಾದ ಪರಿಯ ನೋಡಾ. ತೊಟ್ಟಿಲಿಲ್ಲದೆ ಹಾಸಿ ಮಲಗಿಸಿ ನಿದ್ರೆಗೆಯ್ಸಿದ ಶರಣನಾಚರಣೆಯನೆಂತೆಂಬೆನು. ಇದ ಕಂಡು ನಡೆಯಲರಿಯದೆ, ತಮ್ಮ ಮನ ಬಂದಂತೆ ನಡೆವರು. ಶಿವಯೋಗಕ್ಕೆ ದೂರವಾದರು ನೋಡಾ. ಹೊನ್ನ ಕಟ್ಟಿ ವಿರಕ್ತನು ಬ್ಥಿಕ್ಷೆಯೆನಲಾಗದು. ಭಕ್ತನ ಗೃಹವೆಂದು ಜಂಗಮವು ಹೋದಲ್ಲಿ ಆ ಭಕ್ತನು ಎದ್ದು ನಮಸ್ಕರಿಸಿ ತನ್ನಲ್ಲಿರ್ದ ಪದಾರ್ಥವಂ ತಾನು ಸಹವಾಗಿ ಶಿವಾರ್ಪಣವ ಮಾಡ[ಬ]ಹುದಲ್ಲದೆ. ಇದಲ್ಲದೆ, ಜಂಗಮವ ಬೇರೆ ಕುಳ್ಳಿರಿಸಿ ಉಂಡನಾದರೆ ಅವನಿಗೆ ದೀಕ್ಷೆಯ ಕೊಟ್ಟ ಗುರುವಿಗೆ ತನ್ನ ಮಾರ್ಗವ ಬಿಟ್ಟು ಶಿವಭಕ್ತನಾದರೆ ಮೋಕ್ಷವಿಲ್ಲವಾಗಿ. ಕೋಳಿ ಒಂದು ಕುಟುಕ ಕಂಡರೆ ತನ್ನ ಮರಿಗೆ ತೋರದುಳಿವುದೆ? ಕಾಗೆ ಒಂದಗುಳ ಕಂಡರೆ ತನ್ನ ಬಳಗವ ಕರೆಯದುಳಿವುದೆ? ಶಿವಭಕ್ತನಾಗಿ ತನ್ನ ಲಿಂಗವ ಪೂಜಿಸಿ ಜಂಗಮವ ಮರೆದವನಾದರೆ ಸತ್ತ ದನವಿಗೆ ನರಿ ಹೋದಂತಾಯಿತ್ತು. ಆ ನರಿ ಹೋದ ನೆನಹಿನಲ್ಲಿ ನಾಯಿ ಹೋದಂತಾಯಿತ್ತು. ಇಷ್ಟಕ್ಕಿಂದ ಕರಕಷ್ಟವೆ ಶಿವಭಕ್ತರು? ಷಟ್ಚಕ್ರದ ಭಾವದಲ್ಲಿವೊಪ್ಪಿರುವ ಶಿವಶರಣರು ತಮ್ಮ ನಡೆ ನುಡಿಗಳ ಬಿಡದೆ ನಡೆವುದು. ಅದ ಕಂಡು ಕಣ್ದೆರೆದು ನೋಡಿದೆನಯ್ಯ. ಆವ ವರ್ತನೆಯಲ್ಲಿ ತಾನಿದ್ದರೇನು? ಆವ ಭಾವ ಹೇಂಗಿದ್ದರೇನು? ನಮ್ಮಾಚರಣೆ ನಮಗೆ ಶುದ್ಧ. ಗುರು ಕಲ್ಪಿತನಾದರು ಅವನು ಹಿಂದೆ ಸಂಬಂಧವಾದ ಕಾರಣ, ಅವನಿಗೆ ಬಂಧ ದೊರಕುವದಲ್ಲದೆ ನನಗೆ ದೊರಕದೆಂದು ತಾನು ನಿಶ್ಚೆಸಿದರೆ ತನಗೆ ದೊರಕಬಲ್ಲದೆ? ತಾನು ಪೂರ್ವದಲ್ಲಿ ತಾ ಪಡದುದು ತನಗೆ ತಪ್ಪುವದೆ? ಪ್ರಾಣಿಹಿಂಸೆಯ ಮಾಡುವಾತನಾದರೆಯು ಅವನಿಗೆ ಕಲ್ಪಿತವೇತಕ್ಕೆ? ಹಿಂದೆ ಅವನು ಶಿವನಪ್ಪಣೆವಿಡಿದು ಬಂದ ಕಾರಣ ಅವನಿಗೆ ಬಂದಿತಲ್ಲದೆ ಗಗನದ ಮಂಟಪದ ಮೇಲೆ ಊಧ್ರ್ವಮುಖದ ಗದ್ದುಗೆಯ ಮಾಡಿ ಮಹಾಪ್ರಕಾಶವೆಂಬ ಬೆಳಗಂ ತೋರಿ ಓಂಕಾರವೆಂಬ ಲಿಂಗವ ಮೂರ್ತಮಾಡಿಸಿ ಅದಕ್ಕೆ ಸದ್ಭಾವವೆಂಬ ಪುಷ್ಪವ ತಂದು ಜ್ಞಾನಪ್ರಕಾಶವೆಂಬ ಜ್ಯೋತಿಯಂ ಪೊತ್ತಿಸಿ ಸದ್ಭಕ್ತಿಯೆಂಬ ನೈವೇದ್ಯಮಂ ಮಾಡಿ ನಿರ್ಮಳವೆಂಬ ಪೂಜಾರಿಯಾಗಿರ್ಪನು. ಇದನರಿಯದೆ ತಮ್ಮ ಮನ ಬಂದಂತೆ ಇಪ್ಪವರ ಲಿಂಗಹೋದವನಾದರು ಅವನ ಕಣ್ಣಲ್ಲಿ ಕಂಡು ಅವನಷ್ಟಕ್ಕಲ್ಲದೆ ಅನ್ಯರ ಗೃಹವ ಬಿಡಲೇತಕ್ಕೇ? ಪಾಪವ ಮಾಡಿದನಾರು ಅವನ ಗೃಹಕ್ಕಲ್ಲದೆ ಅವನೊಂದಿಗೆ ಬೆರಸಿದವನಾದರು ಅವನಿಗೆ ಪಾಪ ಸಂಭವಿಸುವುದುಂಟೇ? ಇದ ಸಂಕಲ್ಪವ ಮಾಡಿ ಬಿಡಲೇತಕ್ಕೆ? ಒರ್ವಾನೊಬ್ಬನು ಭವಿಯ ಒಡನಾಡಲು ಅವನ ಪಾಪವು ಅವನಲ್ಲಿಪ್ಪುದಲ್ಲದೆ ಮಿಕ್ಕಿನ ಗೃಹಕ್ಕೆ ಸಂಬಂಧವೇನು? `ಮಾಡಿದವರನಲ್ಲದೆ ಮಿಕ್ಕಿನವರ ಸಂಕಲ್ಪವ ಮಾಡಲಾಗದು'ಯೆಂಬುದು ಗುರುವಚನ. ಹೆಣ್ಣು ಬಿಂದು ಸಂಬಂಧವಾಗಲು ಆ ಭೋಗಕ್ಕೆ ಶರಣನು ಅದನು ಮನದಲ್ಲಿ ಕಂಡು ಸಂತೋಷವಾಗಿಪ್ಪ. ಇಂತೀ ಭಾವಶುದ್ಧವುಳ್ಳಾತನು ಮತ್ರ್ಯಲೋಕಕ್ಕೆ ಮರಳಿ ಬಾರನೆಂಬುದು. ಶರಣ ಸಕಲವಿದ್ಯವ ಕಲಿತು ಫಲವೇನು? ನಿಂದ್ಯನೆ ದೊರಕೊಂಡಮೇಲೆ? ಹುಣ್ಣು ಹುಗಳು ಕೋಷ್ಠವಾಗಿರಲು, ಅವರ ಕಂಡು ಜರಿಯಲಾರದೆಂಬುದೆನ್ನ ಭಾಷೆ. ಇಂದ್ರಿಯಸುಖಕ್ಕೆ ಹೋಗಿ ಬಿದ್ದು ಶಿವಮಾಡಿದರಾಯಿತ್ತೆಂಬ ಅವಿಚಾರದ ನುಡಿಯ ಕೇಳಲಾಗದು. ತನ್ನ ಮನವು ಶುದ್ಧವಾದ ಮೇಲೆ, ಸಕಲ ಸುಖಂಗಳು ತನಗುಂಟಲ್ಲದೆ, ಜ್ಞಾನಿಗೆ ಕತ್ತಲೆಯಿಲ್ಲ. ಅಜ್ಞಾನಿಗೆ ಪಾಪವಿಲ್ಲ. ಇದನರಿದು, ಮುಂದುಗೊಂಡು ತಿರುಗುವ, ಅಣ್ಣಗಳ ಕಂಡು, ನಗುತಿರ್ಪರು ನಿಮ್ಮ ಶರಣರು, ನಿಜಗುರು ಸ್ವತಂತ್ರಸಿದ್ಧಲಿಂಗೇಶ್ವರಾ.
--------------
ಸ್ವತಂತ್ರ ಸಿದ್ಧಲಿಂಗ
ಅಯ್ಯಾ, ಕ್ರಿಯಾವಿಭೂತಿಯ ಧರಿಸಿದ ಭಕ್ತನು ಚಿದ್ರುದ್ರಾಕ್ಷಿಯ ಧರಿಸಿ ಮಂತ್ರಧ್ಯಾನವ ಮಾಡಬೇಕಾದ ನಿಮಿತ್ತ, ಪ್ರಥಮದಲ್ಲಿ ರುದ್ರಾಕ್ಷಿಮಣಿಗಳ ಕ್ರಮವ ಮಾಡದೆ, ಅವರು ಹೇಳಿದಂತೆ ಕ್ರಯವ ಕೊಟ್ಟು ಮುಖಭಿನ್ನವಾದುದನುಳಿದು, ಸ್ವಚ್ಛವಾದ ರುದ್ರಾಕ್ಷಿಗಳ ಶ್ರೀಗುರುಲಿಂಗಜಂಗಮದ ಸನ್ನಿಧಿಗೆ ತಂದು ವೃತ್ತಸ್ಥಾನದ ಪರಿಯಂತರವು ಧೂಳಪಾದೋದಕವ ಮಾಡಿ, ಆ ರುದ್ರಾಕ್ಷಿಯ ಪೂರ್ವಾಶ್ರಯವ ಕಳೆದು, ಲಿಂಗಧಾರಕಭಕ್ತರಿಂದ ಗುರುಪಾದೋದಕ ಮೊದಲಾಗಿ ಶಿವಪಂಚಾಮೃತದಿಂದ ಇಪ್ಪತ್ತೊಂದು ಪೂಜೆಯ ಮಾಡಿಸಿ ಆಮೇಲೆ ಶ್ರೀಗುರುಲಿಂಗಜಂಗಮದ ಪಾದಪೂಜೆಗೆ ಧರಿಸಿ, ಆಮೇಲೆ ಲಿಂಗಜಂಗಮಕ್ಕೆ ಸಮರ್ಪಿಸಿ, ಅವರಿಂದ ದಯಚಿತ್ತವ ಪಡೆದು, ಶರಣುಹೊಕ್ಕು ಮಹಾಪ್ರಸಾದವೆಂದು ಬೆಸಗೊಂಡು, ಆ ಕರುಣಾಕಟಾಕ್ಷ ಮಾಲೆಗಳ ಭಿನ್ನವಿಟ್ಟು ಅರ್ಚಿಸದೆ, ಅಭಿನ್ನಸ್ವರೂಪು ಮುಂದುಗೊಂಡು ಬಹುಸುಯಿಧಾನದಿಂದ ತನ್ನ ತೊಡೆಯ ಮೇಲೆ ಮೂರ್ತವ ಮಾಡಿಕೊಂಡು, ತನ್ನ ಜ್ಞಾನಪ್ರಕಾಶವೆಂದು ಭಾವಿಸಿ ತನ್ನ ತಾನರ್ಚಿಸಿ, ಮಂತ್ರಧ್ಯಾನಾರೂಢನಾಗಿ ತತ್ತತ್ ಸ್ಥಾನದಲ್ಲಿ ಧರಿಸುವುದಯ್ಯಾ. ಇಂತು ವಿಭೂತಿ ರುದ್ರಾಕ್ಷಿಯ ಧರಿಸಿ ಲಿಂಗನಿಷ್ಠಾಪರನಾದ ಭಕ್ತನು ಸ್ಥಲಮೆಟ್ಟಿಗೆಯಿಂದ ಆಯಾಯ ಮಂತ್ರವ ಹೇಳುವುದಯ್ಯಾ. ಅದರ ವಿಚಾರವೆಂತೆಂದಡೆ: ಕ್ರಿಯಾದೀಕ್ಷಾಯುಕ್ತನಾದ ಉಪಾಧಿಭಕ್ತಂಗೆ ಗುರುಮಂತ್ರವ ಹೇಳುವುದಯ್ಯಾ. ಕ್ರಿಯಾದೀಕ್ಷೆಯ ಪಡೆದು ಗುರುಲಿಂಗಜಂಗಮದಲ್ಲಿ ಅರ್ಥಪ್ರಾಣಾಭಿಮಾನಂಗ? ನಿರ್ವಂಚಕತ್ವದಿಂದ ಸಮರ್ಪಿಸಿ ನಡೆನುಡಿ ಸಂಪನ್ನನಾದ ನಿರುಪಾಧಿಭಕ್ತಂಗೆ ಲಿಂಗಮಂತ್ರವ ಹೇ?ುವುದಯ್ಯಾ ಇವರಿಬ್ಬರ ಆಚರಣೆಯ ಪಡೆದು ಸಮಸ್ತ ಭೋಗಾದಿಗಳು ನೀಗಿಸಿ ಸಚ್ಚಿದಾನಂದನಾದ ಸಹಜಭಕ್ತಂಗೆ ಜಂಗಮಮಂತ್ರವ ಹೇ?ುವುದಯ್ಯಾ. ಆ ಮಂತ್ರಂಗಳಾವುವೆಂದಡೆ: ಶಕ್ತಿಪ್ರಣವ ಹನ್ನೆರಡು ಗುರುಮಂತ್ರವೆನಿಸುವುದಯ್ಯಾ, ಶಿವಪ್ರಣವ ಹನ್ನೆರಡು ಲಿಂಗಮಂತ್ರವೆನಿಸುವುದಯ್ಯಾ, ಶಿವಶಕ್ತಿರಹಿತವಾದ ಹನ್ನೆರಡು ಜಂಗಮಮಂತ್ರವೆನಿಸುವುದಯ್ಯಾ. ಇಂತು ವಿಚಾರದಿಂದ ಉಪಾಧಿ ನಿರುಪಾಧಿ ಸಹಜಭಕ್ತ ಮಹೇಶ್ವರರಾಚರಿಸುವುದಯ್ಯಾ. ಇನ್ನು ನಿರಾಭಾರಿ ವೀರಶೈವನಿರ್ವಾಣ ಸದ್ಭಕ್ತಜಂಗಮಗಣಂಗಳು ಶುದ್ಧಪ್ರಸಾದಪ್ರಣವ ಹನ್ನೆರಡು, ಸಿದ್ಧಪ್ರಸಾದಪ್ರಣವ ಹನ್ನೆರಡು, ಪ್ರಸಿದ್ಧಪ್ರಸಾದಪ್ರಣವ ಹನ್ನೆರಡು, ಇಂತು ವಿಚಾರದಿಂದ ಮೂವತ್ತಾರು ಪ್ರಣವವನೊಡಗೂಡಿ, ಶುದ್ಧಪ್ರಸಾದಪ್ರಣವ ಆಚಾರಲಿಂಗ ಗುರುಲಿಂಗ ಇಷ್ಟಲಿಂಗ ಪರಿಯಂತರ ತ್ರಿವಿಧ ಲಿಂಗಕ್ಕೆಂದು ಮಾಡುವುದಯ್ಯಾ. ಸಿದ್ಧಪ್ರಸಾದಪ್ರಣವ ಶಿವಲಿಂಗ ಜಂಗಮಲಿಂಗ ಪ್ರಾಣಲಿಂಗ ಪರಿಯಂತರ ತ್ರಿವಿಧಲಿಂಗಕ್ಕೆಂದು ಮಾಡುವುದಯ್ಯಾ. ಪ್ರಸಿದ್ಧಪ್ರಸಾದಪ್ರಣವ ಪ್ರಸಾದಲಿಂಗ ಮಹಾಲಿಂಗ ಭಾವಲಿಂಗ ಪರಿಯಂತರ ತ್ರಿವಿಧಲಿಂಗಕ್ಕೆಂದು ಮಾಡುವುದಯ್ಯಾ. ಹೀಗೆ ಹರುಕಿಲ್ಲದೆ ಸ್ಥಲಮೆಟ್ಟಿಗೆಯಿಂದ ಕರುಣಿಸಿದ ಗುರುವಿಂಗೆ ಬೆಸಗೊಂಡ ಶಿಷ್ಯೋತ್ತಮಂಗೆ. ಆಯಾಯ ಲಿಂಗಪ್ರಸಾದ ಒದಗುವುದೆಂದಾಂತ ನಮ್ಮ ಕೂಡಲಚೆನ್ನಸಂಗಮದೇವ
--------------
ಚನ್ನಬಸವಣ್ಣ
ಮಣ್ಣ ಮೆಚ್ಚಿ ಗುರುವಿಗೆ ಹೊರತಾದೆ, ಹೆಣ್ಣ ಮೆಚ್ಚಿ ಲಿಂಗಕ್ಕೆ ಹೊರತಾದೆ, ಹೊನ್ನ ಮೆಚ್ಚಿ ಜಂಗಮಕ್ಕೆ ಹೊರತಾದೆ. ಇಂತೀ ತ್ರಿವಿಧವ ಮೆಚ್ಚಿ ಅಕಟಕಟಾ ಕೆಟ್ಟೆನೆಂದು ಗುರೂಪಾವಸ್ತೆಯಂ ಮಾಡಿ, ಗುರುವಾಕ್ಯ ಪ್ರಮಾಣವಿಡಿದು, ಆಚರಿಸುವ ಜ್ಞಾನಕಲಾತ್ಮನಿಗೆ ಈ ಲೋಕದ ಜಡಜೀವರು ಕಡುಪಾತಕರು ಬಂದು ಈ ಸಂಸಾರದಲ್ಲಿ ಪಾರಮಾರ್ಥವುಂಟು, ಇದರೊಳಗೆ ಸಾದ್ಥಿಸಬೇಕೆಂದು ಇಹ ಬಿಟ್ಟು ವೈರಾಗ್ಯದಲ್ಲಿ ಮೋಕ್ಷವಿಲ್ಲೆಂದು ಹೇಳುವರು. ಇದಕ್ಕೆ ಉಪಮೆ- ಹಿಂದೆ ಕಲ್ಯಾಣಪಟ್ಟಣಕ್ಕೆ ತಮ್ಮ ತಮ್ಮ ದೇಶವ ಬಿಟ್ಟು ಬಂದ ಗಣಂಗಳಾರಾರೆಂದಡೆ: ಮೋಳಿಗೆ ಮಾರತಂದೆಗಳು ಕಾಶ್ಮೀರದೇಶದ ಅರಸು. ನಿಜಗುಣಸ್ವಾಮಿಗಳು ಕೈಕಾಡದೇಶದ ಅರಸು. ನುಲಿಯ ಚಂದಯ್ಯನವರು ಕೈಕಾಣ್ಯದೇಶದ ಅರಸುಗಳು. ಇಂತಿವರು ಮೊದಲಾದ ಬಸವಾದಿ ಪ್ರಭುದೇವರಾಂತ್ಯಮಾದ ಏಳನೂರೆಪ್ಪತ್ತು ಪ್ರಮಥಗಣಂಗಳು. ತಮ್ಮ ತಮ್ಮ ದೇಶವ ಬಿಟ್ಟು ಕಲ್ಯಾಣಕ್ಕೆ ಬಂದರು. ಅವರೆಲ್ಲರು ಹುಚ್ಚರು, ನೀವೇ ಬಲ್ಲವರು. ಬಸವೇಶ್ವರದೇವರು ಮೊದಲಾಗಿ ಏಳನೂರೆಪ್ಪತ್ತು ಪ್ರಮಥಗಣಂಗಳು ಕೂಡಿ ತಮ್ಮ ತಮ್ಮ ಹೃನ್ಮಂದಿರದಲ್ಲಿ ನೆಲಸಿರುವ ಪರಶಿವಲಿಂಗಲೀಲಾವಿನೋದದಿಂ ಎರಡೆಂಬತ್ತೆಂಟುಕೋಟಿ ವಚನಗಳನ್ನು ಹಾಡಿಕೊಂಡರು. ಇದರನುಭಾವವ ತಿಳಿಯಬಲ್ಲರೆ ಹೇಳಿರಿ; ಅರಿಯದಿದ್ದರೆ ಕೇಳಿರಿ. ತನು-ಮನ-ಧನ ನೀನಲ್ಲ, ಪಂಚವಿಂಶತಿತತ್ವ ನೀನಲ್ಲ, ಪಂಚಭೂತಪ್ರಕೃತಿ ನೀನಲ್ಲ, ಮನ ಮೊದಲಾದ ಅರವತ್ತಾರುಕೋಟಿ ಕರಣಾದಿ ಗುಣಂಗಳು ನೀನಲ್ಲ. ಇಂತೀ ಎಲ್ಲವನು ನೀನಲ್ಲ, ನೀನು ಸಾಕಾರಸ್ವರೂಪಲ್ಲವೆಂದು ಸ್ವಾನುಭಾವಜ್ಞಾನಗುರುಮುಖದಿಂದ ತಿಳಿದು ಸಕಲಪ್ರಪಂಚವನೆಲ್ಲವ ನಿವೃತ್ತಿಯ ಮಾಡಿ, ಸಕಲಸಂಶಯವಂ ಬಿಟ್ಟು, ನಿಶ್ಚಿಂತನಾಗಿ, ಏಕಾಗ್ರಚಿತ್ತದಲ್ಲಿ ಸ್ವಸ್ಥಿರನಾಗಿ ಮುಂದೆ ಶಿವಪಥವ ಸಾದ್ಥಿಸೆಂದು ಹಾಡಿದರಲ್ಲದೆ ಅವರೇನು ದಡ್ಡರೇ? ನೀವೇ ಬಲು ಬುದ್ಧಿವಂತರು, ಬಲುಜಾಣರು ! ಇಂಥ ಯುಕ್ತಿ ವಿಚಾರವ ಹೇಳುವ ಮತಿಭ್ರಷ್ಟ ಹೊಲೆಯರ ಕಾಲು ಮೇಲಕ್ಕೆ ಮಾಡಿ, ತಲೆ ಕೆಳಯಕ್ಕೆ ಮಾಡಿ ಅವರಂಗದ ಮೇಲಿನ ಚರ್ಮವ ಹೋತು ಕುರಿಗಳ ಚರ್ಮವ ಹರಿದ ಹಾಗೆ ಹರಿದು, ಅವರ ತಿದಿಯನೆ ಹಿರಿದು, ಅವರ ಕಂಡವ ಕಡಿದು, ಚಿನಿಪಾಲವ ಮಾಡಿ, ಹದ್ದು ಕಾಗೆ ನಾಯಿ ನರಿಗಳಿಗೆ ಹಾಕೆಂದ ಕಾಣಾ ನಿಮ್ಮ ಶರಣ ವೀರಾದ್ಥಿವೀರ ಕಾಡನೊಳಗಾದ ಶಂಕರಪ್ರಿಯ ಚನ್ನಕದಂಬಲಿಂಗ ನಿರ್ಮಾಯಪ್ರಭುವೆ.
--------------
ಕಾಡಸಿದ್ಧೇಶ್ವರ
ಇನ್ನಷ್ಟು ... -->