ಅನಾದಿಯ ಭ್ರೂಮಧ್ಯದಲ್ಲಿ, ಐದು ಕುದುರೆಯ ಕಟ್ಟಿದ ಕಂಬ, ಮುರಿಯಿತ್ತು ! ಎಂಟಾನೆ ಬಿಟ್ಟೋಡಿದವು ! ಹದಿನಾರು ಪ್ರಜೆ ಬೊಬ್ಬಿಡುತಿರ್ದರು. ಶತಪತ್ರಕಮಲಕರ್ಣಿಕೆಯ ಮಧ್ಯದಲ್ಲಿ ಗುಹೇಶ್ವರಲಿಂಗ ಶಬ್ದ ಮುಗ್ಧವಾಗಿರ್ದನು.
ಬಯಕೆ ಎಂಬುದು ದೂರದ ಕೂಟ, `ಬಯಸೆ' ಎಂಬುದು ಕೂಟದ ಸಂದು. ಈ ಉಭಯವೂ ಕಪಟ ಕನ್ನಡವಲ್ಲದೆ ಸಹಜವಲ್ಲ. ಕೂಡಿ ಕಂಡ ಪರಿಯೆಂತು ಹೇಳಾ ಇನ್ನು ಲಿಂಗೈಕ್ಯವನು ? ಕೂಪಠಾವಿನಲ್ಲಿ ಪರವಶವಾದೆನೆಂಬ ಮಾತ ಮೆಚ್ಚುವನೆ ನಮ್ಮ ಗುಹೇಶ್ವರಲಿಂಗ ?
ಮುನ್ನ ಎಂತಾಯಿತ್ತು ? ಆಗದಡೆಂತಾಯಿತ್ತು ? ತನ್ನ ತಾನು ಅರಸುತ್ತಿದ್ದಿತ್ತು. ತನ್ನ ಬಚ್ಚಿಟ್ಟ ಬಯಕೆಯ ನಿಧಾನವ ಕಂಡು ತಾನೆ ಮಹವೆಂದು ತಿಳಿದು ನೋಡಾ. ಗುಹೇಶ್ವರಲಿಂಗ ತನ್ನುವ ತನ್ನಂತೆ ಮಾಡಿತ್ತು.