ಅಯ್ಯ, ಸ್ಥೂಲದೇಹದ ಸುಖದಲ್ಲಿ ಹೊದ್ದಿದವರು ಸೂಕರನ ಹಾಂಗೆ.
ಸೂಕ್ಷ್ಮದೇಹದ [ಸುಖ]ದಲ್ಲಿ ಹೊದ್ದಿದವರು ಮದಗಜದಂತೆ.
ಕಾರಣ ದೇಹದ ಸುಖದಲ್ಲಿ ಹೊದ್ದಿದವರು ರಾಜಹಂಸನ ಹಾಂಗೆ.
ಅದೆಂತೆಂದಡೆ:
ಸ್ಥೂಲದೇಹವೆಂದಡೆ ಸಪ್ತಧಾತುಯುಕ್ತವಾದ ಪಂಚವಿಂಶತಿತತ್ತ್ವ ಸ್ವರೂಪು,
ಆ ದೇಹಕ್ಕೆ ಬಿಂದು ಮಾತ್ರ ಸುಖ ಪರ್ವತದಷ್ಟು ದುಃಖ ನೋಡಾ.
ಸೂಕ್ಷ್ಮದೇಹವೆಂದಡೆ:ಪಂಚರಸಾಮೃತಸ್ವರೂಪವಾದ ಕರಣಂಗಳು.
ಆ ದೇಹಕ್ಕೆ ಬಿಂದು ಮಾತ್ರ ದುಃಖವು, ಪರ್ವತದಷ್ಟು ಸುಖ ನೋಡಾ.
ದಶವಿಧತತ್ತ್ವಸ್ವರೂಪವಾದ ಕಾರಣದೇಹವೆಂದಡೆ:
ಅನಂತನಾದಸ್ವರೂಪವಾದ ಏಕತತ್ತ್ವವನ್ನುಳ್ಳ ಆತ್ಮನೆ ಕಾರಣದೇಹ,
[Àಅದು] ದಿವ್ಯ ಸುಧಾರಸಾಮೃತಸ್ವರೂಪವಾದ ಮಹಾಸದ್ಗಂಧದ
ಪರಿಮಳದಂತಿಪ್ಪುದು ನೋಡಾ.
ಆ ದೇಹಕ್ಕೆ ಅಣುಮಾತ್ರ ದುಃಖವಿಲ್ಲದ ಸುಖವುಂಟು ನೋಡಾ,
ಲಿಂಗಸಂಗಿಯಾದ ಕಾರಣ.
ಇಂತಪ್ಪ ಲಿಂಗಸಂಗದಿಂದ ಅಖಂಡಸುಖಿ ತಾನಾಗಬೇಕಾದಡೆ
ಪಿಂಡಾದಿ ಜ್ಞಾನಶೂನ್ಯಾಂತಮಾದ ನೂರೊಂದು ಸ್ಥಳ_ಕುಳವ
ಕರತಳಾಮಳಕವಾಗಿ ತಿಳಿದು,
ಮೇಲಾದ ಜ್ಞಾನಶೂನ್ಯಸ್ಥಲದಲ್ಲಿ ನಿಂದು,
ಪಿಂಡಾದಿ ಜ್ಞಾನ ಗುರುಕರುಣ ಸ್ಥಲಂಗಳೆಂಬ ಮಾರ್ಗವು ತಪ್ಪದೆ
ನಡೆ_ನುಡಿ ಸಂಪನ್ನರಾಗಿ ನಿಜಾಚರಣೆಯಲ್ಲಿ ನಿಂದು
ಅರು ವೈರಿ ಅಷ್ಟಮದ [ಸಪ್ತ]ವ್ಯಸನವೆಂಬ ಮಾಯಾಪಾಶಪರ್ವತಕ್ಕೆ
ವಜ್ರಾಯುಧವಾಗಿ ನಿಂದರು ನೋಡಾ ನಮ್ಮ ಶರಣಗಣಂಗಳು.
ಇಂತು_ಕಾರಣಸ್ವರೂಪವಾದ
ಚಿದ್ಘನಲಿಂಗ ನಡೆ_ನುಡಿ_ಸ್ಥಳ_ಕುಳದನುಭಾವ ಸುಖವ ಪಡೆಯದ
ಶೈವ ಜಡಕರ್ಮಿಗಳೆಲ್ಲ,
ಅರುವೈರಿ ಅಷ್ಟಮದ ಸಪ್ತವ್ಯಸನವೆಂಬ
ಮಾಯಾಪಾಶ ಕಾಲ ಕಾಮರ ಬಾಧೆಗೊಳಗಾಗಿ
ಗುಹೇಶ್ವರಲಿಂಗದ ಶರಣರ ಮಾರ್ಗವನರಿಯದೆ [ಕೆಟ್ಟರು].
ಕೆಟ್ಟಿತೀ ಲೋಕ ನೋಡಾ ಸಿದ್ಧರಾಮಯ್ಯಾ.