ಅಥವಾ

ಒಟ್ಟು 15 ಕಡೆಗಳಲ್ಲಿ , 12 ವಚನಕಾರರು , 14 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಆಕಾಶದ ಮೇಲೆ ಏಕಾಂತ ಸೂಳೆಯ ಕಂಡೆನಯ್ಯ. ಆ ಸೂಳೆಯ ಗೃಹದಲ್ಲಿ ಸಾಸಿರದಳ ಕಮಲಮಂಟಪವ ಕಂಡೆನಯ್ಯ. ಆದಿಯಲ್ಲಿ ಒಬ್ಬ ವಿಟನು, ಮೂವರು ಗೆಳೆಯರ ಕೂಡಿಕೊಂಡು, ಹೃದಯದಲ್ಲಿರ್ದ ರತ್ನವ ತೆಗೆದು, ಆ ಸೂಳೆಗೆ ಒತ್ತೆಯಂ ಕೊಟ್ಟು, ಸಂಗಸಂಯೋಗಮಂ ಮಾಡುವುದ ಮೂವರು ಗೆಳೆಯರು ಕಂಡು ನಿರ್ವಯಲಾದುದ ಕಂಡೆನಯ್ಯ ಝೇಂಕಾರ ನಿಜಲಿಂಗಪ್ರಭುವೆ.
--------------
ಜಕ್ಕಣಯ್ಯ
ಆನಂದಸ್ಥಳದಲ್ಲಿ ಊಧ್ರ್ವ ಕಂಜಕನ್ನಿಕೆಗೆ ಇಂದುವಿನ ಕೊಡನ ಹೊತ್ತಾಡುತ್ತೈದಾಳೆ. ಮೂಲಪಟ್ಟಣದಲ್ಲಿ ಮೂವರಿಗೆ ರತಿಯ ಹುಟ್ಟಿಸುತ್ತೈದಾಳೆ. ಅಪರಪಟ್ಟಣದಲ್ಲಿ ಹಲವರಿಗೆ ಆಶ್ರಯವಾಗಿ ಐದಾಳೆ. ಮಧ್ಯಮಪಟ್ಟಣದಲ್ಲಿ ಮಹಾಮಹೀಶ್ವರರಿಗೆ ಮಹಾದಾಶ್ರಯವಾಗಿ ಐದಾಳೆ. ಇಂತು ಪಟ್ಟಣ ಹದಿನೆಂಟಕ್ಕ ಸೀಮೆ ಇಪ್ಪತ್ತೈದು, ಗ್ರಾಮ ಮೂವತ್ತಾರು ಸಂಯೋಗವೆಂಬ ನಗರಿಯಲ್ಲಿ ನಿತ್ಯಸಾನಂದನೆಂಬಾತ ಕುಳ್ಳಿದ್ದು, ಪಟ್ಟಣ ಹನೆಂಟರ ವ್ಯಾಪ್ತಿಯ ತಳವಾರರೆಂಟು ಮಂದಿಯ ಗ್ರಾಮ ಬಂಧನೆಯ ಮಾಡಲೀಯದೆ ಸುಚಿತ್ತದಿಂ ನಡಸುತ್ತೈದಾನೆ. ನೆನೆವ ಮನಸ್ಸಿನಲ್ಲಿ ಅವಿತಥವಿಲ್ಲದೆ ಚಿತ್ತವೃತ್ತಿಯನ್ನರಿತು ಮಹಾಲೋಕದಲಿಪ್ಪ ಮೂನ್ನೂರ ಮೂವತ್ತಮೂರು ಕುಲದುರ್ಗಂಗಳಂ ಪಾಟಿಸಿ ಸುಯಿಧಾನಿಯಾಗಿರುತ್ತೈದಾನೆ. ಅಜಲೋಕದಲ್ಲಿ, ಶುದ್ಧಸಂಯೋಗ ಸಂಗಮನೆಂಬ ಗೃಹದಲ್ಲಿ, ಮೂಲಕ ಮುಕ್ತಕಾ ರುದ್ರಕ ಅನುಮಿಷಕ ಆಂದೋಳಕ ವಿಚಿತ್ರಕ ಸಕಲ ಮುಕ್ತ್ಯಕ್ಕ, ಸಾನಂದ ಸತ್ಯಕ್ಕ ಇಂತಪ್ಪ ಮಹಾಸ್ತ್ರೀಯರ ಚಿತ್ತಕ್ಕೆ ಸಗುಣವಪ್ಪುದನೊಂದನೆ ಕೂಡಿ ಭೋಗಿಸುತ್ತೈದಾನೆ. ಅವರು ಸ್ತ್ರೀಯರು, ತಾ ಪುರುಷನಾಗಿ ಕೂಡುತ್ತೈದಾನೆ, ಅವಿತಥವಿಲ್ಲದೆ ಆ ಕೂಟದ ಸುಖವನು ಶಿಶು ಬಲ್ಲ, ಶಿಶುವಿನ ಜನನವನು ಅವ್ವೆ ಬಲ್ಲಳು. ಅವ್ವೆಯ ಇಚ್ಛಾ ಮಾತ್ರದಲ್ಲಿದ್ದು ಕಪಿಲಸಿದ್ಧಮಲ್ಲಿಕಾರ್ಜುನಯ್ಯನೆಂಬ ತೈಲಿಂಗಕ್ಕೆ ಮೂಲವಾದಳವ್ವೆ.
--------------
ಸಿದ್ಧರಾಮೇಶ್ವರ
ಸದ್ಭಕ್ತಂಗೆಯೂ ಜಂಗಮಕ್ಕೆಯೂ ಭಾಜನ ಬೇರೆಂಬ ಶಾಸ್ತ್ರದ ಸದಗರು ನೀವು ಕೇಳಿರೋ. ಭಕ್ತದೇಹಿಕ ದೇವನೆಂದು ಶ್ರುತಿ ಸಾರುತ್ತಿವೆ, ಅರಿದು ಮರೆಯದಿರಿ, ಮರವೆಯಿಂದ ಬ್ರಹ್ಮ ಶಿರವ ಹೋಗಾಡಿಕೊಂಡ, ಮರವೆಯಿಂದ ದಕ್ಷ ಶಿರವ ನೀಗಿ ಕುರಿದಲೆಯಾದುದನರಿಯಿರೆ ಮರೆಯದೆ ವಿಚಾರಿಸಿ ನೋಡಿ, ಭಕ್ತಂಗೂ ಲಿಂಗಕ್ಕೂ ಭಿನ್ನವಿಲ್ಲ. ಇನ್ನು ಆ ಭಕ್ತಂಗೆಯೂ ಆ ಜಂಗಮಕ್ಕೆಯೂ ಭೇದವಿಲ್ಲ. ಬೇರ್ಪಡಿಸಿ ನುಡಿಯಲುಂಟೆ ಇನ್ನು ಆ ಗುರುವಿಂಗೆಯೂ ಆ ಭಕ್ತಂಗೆಯೂ ಸಂಕಲ್ಪವಿಲ್ಲ. ಅದೆಂತೆಂದಡೆ; ಮೆಟ್ಟುವ ರಕ್ಷೆ, ಮುಟ್ಟುವ ಯೋನಿ, ಅಶನ, ಶಯನ, ಸಂಯೋಗ, ಮಜ್ಜನ, ಭೋಜನ ಇಂತಿವನು ಗುರುಲಿಂಗಜಂಗಮ ಸಹಿತವಾಗಿ ಭೋಗಿಸುವ ಸದ್ಭಕ್ತಂಗೆ ನಾನು ನಮೋ ನಮೋ ಎಂಬೆನು. ಅದೆಂತೆಂದಡೆ; ಅರ್ಥಪ್ರಾಣಾಭಿಮಾನಂ ಚ ಗುgõ್ಞ ಲಿಂಗೇ ಚ ಜಂಗಮೇ± ತಲ್ಲಿಂಗಜಂಗಮಪ್ರಾಣಂ ಭಕ್ತಸ್ಥಲಮುದಾಹೃತಮ್ ಎಂದುದಾಗಿ, ಇದನರಿದು ಅರ್ಥವನೂ ಪ್ರಾಣವನೂ ಅಭಿನವನೂ ಗುರುಲಿಂಗಜಂಗಮಕ್ಕೆ ಸಮರ್ಪಿಸಿ ಆ ಗುರುಲಿಂಗಜಂಗಮವೆ ಪ್ರಾಣವಾಗಿಹ ಸದ್ಭಕ್ತಂಗೆಯೂ ಆ ಗುರುಲಿಂಗಜಂಗಮಕ್ಕೆಯೂ ಏಕಭಾಜನವಲ್ಲದೆ ಏಕಭೋಜನವಲ್ಲದೆ, ಭಿನ್ನಭಾಜನ ಭಿನ್ನಭೋಜನವುಂಟೆ _ಇಲ್ಲವಾಗಿ, ಅದೇನು ಕಾರಣವೆಂದಡೆ; ಆ ಸದ್ಭಕ್ತನ ಅಂಗವೆಂಬ ಗೃಹದಲ್ಲಿ ಜಂಗಮವಿಪ್ಪನಾಗಿ ಇದನರಿದು ಬೇರೆ ಮಾಡಿ ನುಡಿಯಲಾಗದು. ಚೆನ್ನಯ್ಯನೊಡನುಂಬುದು ಆವ ಶಾಸ್ತ್ರ ಕಣ್ಣಪ್ಪ ಸವಿದುದ ಸವಿವುದಾವ ಶಾಸ್ತ್ರ ಭಕ್ತದೇಹಿಕ ದೇವನಾದ ಕಾರಣ. ಅದೆಂತೆಂದಡೆ; ಭಕ್ತಜಿಹ್ವಾಗ್ರತೋ ಲಿಂಗಂ ಲಿಂಗಜಿಹ್ವಾಗ್ರತೋ ರುಚಿಃ ರುಚ್ಯಗ್ರೇ ತು ಪ್ರಸಾದೋಸ್ತು ಪ್ರಸಾದಃ ಪರಮಂ ಪದಂ ಇಂತೆಂಬ ಪುರಾಣವಾಕ್ಯವನರಿದು ಸದ್ಭಕ್ತನೂ ಗುರುಲಿಂಗಜಂಗಮವೂ ಈ ನಾಲ್ವರೂ ಒಂದೆ ಭಾಜನದಲ್ಲಿ ಸಹಭೋಜನಮಾಡುವರಿಂಗೆ ಇನ್ನೆಲ್ಲಿಯ ಸಂಕಲ್ಪವೊ, ಇನ್ನೆಲ್ಲಿಯ ಸೂತಕವೋ, ಇನ್ನೆಲ್ಲಿಯ ಪಾತಕವೋ ಕೂಡಲಸಂಗಮದೇವಾ.
--------------
ಬಸವಣ್ಣ
ದ್ವಾದಶಮಾಸ, ಚತುದರ್ಶಿ, ದ್ವಾದಶಿ, ಅಮವಾಸಿಯೊಳಗೆ ಮಾಘಮಾಸದ ಚತುರ್ದಶಿ, ಶಿವರಾತ್ರಿ ಅಮವಾಸ್ಯೆ ಫಲಪುಣ್ಯ ಮಹಾದೊಡ್ಡದು ಎಂದು ಸ್ಕಂದಪುರಾಣ ಬ್ರಹ್ಮೋತ್ತರಕಾಂಡ, ಶ್ರುತಿವಾಕ್ಯಗಳಿಂದ ಕೇಳಿ, ಅಂತಪ್ಪ ಮಾಘಮಾಸದ ಚತುರ್ದಶಿದಿವಸ ಒಂದೊತ್ತು ಉಪವಾಸವ ಮಾಡಿ, ಪತ್ರಿ, ಪುಷ್ಪ. ಕಡ್ಡಿ, ಬತ್ತಿಯ ತಂದು ಸಾಯಂಕಾಲಕ್ಕೆ ಸ್ನಾನವ ಮಾಡಿ, ಜಂಗಮವ ಕರತಂದು ಅರ್ಚಿಸಿ, ಲಿಂಗವ ಪತ್ರಿ, ಪುಷ್ಪ, ಅಭೀಷೇಕ, ಕಡ್ಡಿ, ಬತ್ತಿ, ಏಕಾರತಿ ಪಂಚಾರತಿಗಳಿಂದ ಪೂಜಿಸಿ, ಪಾದೋದಕವ ಸೇವಿಸಿ, ಆ ಮೇಲೆ ತಮ್ಮ ಗೃಹದಲ್ಲಿ ಮಾಡಿದ ಉತ್ತಮವಾದ ಫಲಹಾರ ಜೀನಸುಗಳು ಅಂಜೂರ, ದ್ರಾಕ್ಷಿ, ಹಲಸು, ತೆಂಗು, ಕಾರಿಕ, ಬಾಳೇಹಣ್ಣು ಮೊದಲಾದ ಫಲಹಾರ ಮತ್ತಂ, ಬೆಂಡು, ಬೆತ್ತಾಸ, ಖರ್ಜೂರ, ದೂದುಪೇಡೆ, ಬುಂದೆ, ಲಡ್ಡು ಮೊದಲಾದ ಫಲಹಾರ. ಇಂತಪ್ಪ ಫಲಹಾರ ಜೀನಸು ಎಡೆಮಾಡಿ ಪ್ರಸಾದವೆಂದು ಕೈಕೊಂಡು, ಲಿಂಗಕ್ಕೆ ತೋರಿ ತೋರಿ ತಮ್ಮ ಮನಬಂದ ಪದಾರ್ಥವ ಅಂಗಕ್ಕೆ ಗಡಣಿಸಿಕೊಂಡು, ನಾವು ಇಂದಿನ ದಿವಸ ಉದಯದಿಂ ಸಾಯಂಕಾಲದ ಪರಿಯಂತರವಾಗಿ, ಒಂದೊತ್ತು ಉಪವಾಸ ಮಾಡಿ ಶಿವಯೋಗ ಮಾಡಿದೆವೆಂದು ಮೂಢ ಮಂದಮತಿ ಅಧಮರ ಮುಂದೆ ತಮ್ಮ ಬಿಂಕವ ಪೇಳಿ, ರಾತ್ರಿಯಲ್ಲಿ ಜಾಗರಣಿ ಮಾಡಬೇಕೆಂದು ತಮ್ಮ ಅಂಗದ ಮೇಲಣ ಲಿಂಗವ ಬಿಗಿಬಿಗಿದು ಕಟ್ಟಿಕೊಂಡು ಸ್ಥಾವರಲಿಂಗದ ಗುಡಿಗೆ ಹೋಗಿ ಆ ಲಿಂಗದ ಪೂಜೆಯಿಂದ ಬೆಳಗ ಕಳೆದು ಉದಯಕ್ಕೆ ಶಿವರಾತ್ರಿ ಅಮವಾಸೆ ದೊಡ್ಡದೆಂದು ಹಳ್ಳ ಹೊಳೆಗೆ ಹೋಗಿ, ಛಳಿಯಲ್ಲಿ ತಣ್ಣೀರೊಳಗೆ ಮುಳುಗಿ, ಸ್ನಾನವ ಮಾಡಿ ಬಂದು ಜಂಗಮವ ಕರಿಸಿ, ಮೃಷ್ಟಾನ್ನವ ಹೊಟ್ಟೆತುಂಬ ಘಟ್ಟಿಸಿ, ಶಿವರಾತ್ರಿ ಶಿವಯೋಗದ ಪಾರಣೆಯಾಯಿತೆಂದು ಮಹಾ ಉಲ್ಲಾಸದಿಂ ತಮ್ಮೊಳಗೆ ತಾವೇ ಇಪ್ಪರಯ್ಯಾ. ಇಂತಪ್ಪ ಅವಿಚಾರಿಗಳಾದ ಅಜ್ಞಾನ ಜೀವಾತ್ಮರಿಗೆ ವೀರಮಾಹೇಶ್ವರರೆಂದಡೆ ಪರಶಿವಯೋಗಿಗಳಾದ ಶಿವಶರಣರು ನಗುವರಯ್ಯ ಕಾಡನೊಳಗಾದ ಶಂಕರಪ್ರಿಯ ಚನ್ನಕದಂಬಲಿಂಗ ನಿರ್ಮಾಯಪ್ರಭುವೆ.
--------------
ಕಾಡಸಿದ್ಧೇಶ್ವರ
ಗಂಡನ ಸುಖಬಲ್ಲ ಮಿಂಡೆಯರೆಲ್ಲ ಬನ್ನಿರೆ. ತಂಡ ತಂಡದ ಭೋಗವನಾ ಮಂಡಲದ ಮಾನಿನಿಯರೇನು ಬಲ್ಲರು ಕಾಣಿರೆ ! ಸುಚಿತ್ತಾಲಯದಲ್ಲಿ ಬಹಿರಚತುಷ್ಟಿಕಳಾಯುಕ್ತದಿಂ ನೆರೆವ ವತ್ತರ ಒಲುಮೆಯ ರತಿಯೊಳ್ಮುಳುಗಿದ ಸೊಬಗಿನ ಸೊನ್ನೆಯನೇನೆಂಬೆನವ್ವ ! ಸುಬುದ್ಧಿ ನಿಲಯದಲ್ಲಿ ಮಧ್ಯಚತುಷ್ಟಿಕಳಾಯುಕ್ತದಿಂ ಕೂಡುವ ಬಣ್ಣಿತೆ ಭಾವರಮ್ಯ ನಯವಪ್ಪುಗೆಯಸುಖದೊಳ್ಮುಳುಗಿದ ಪರಿಣಾಮದ ಕುಶಲವನೇನೆಂಬೆನವ್ವ ! ನಿರಹಂಕಾರ ಗೃಹದಲ್ಲಿ ಅಂತಃಚತುಷ್ಟಿಕಳಾಯುಕ್ತದಿಂ ಸಂಯೋಗಿಸುವ ಎಳೆಮೋಹ ಸಮತೆಯ ಸುಖದೊಳ್ಮುಳುಗಿದ ಪರಮಪರಿಣಾಮವನೇನೆಂಬೆನವ್ವ ! ಸುಮನಮಂಟಪದಲ್ಲಿ ಮಹಾನುಭಾವ ಚತುಷ್ಟಿಕಳಾಯುಕ್ತದಿಂ ಸಂಯೋಗಿಸುವ ಕಲೆ ಸೋಂಕು ರತಿರಮ್ಯದೊಳ್ಮುಳುಗಿದ ಅತಿಶಯದುನ್ನತಿಯನೇನೆಂಬೆನವ್ವ ! ಸುಜ್ಞಾನಮಂದಿರದಲ್ಲಿ ಆನಂದಚತುಷ್ಟಿಕಳಾಯುಕ್ತದಿಂ ನೆರೆವ ಮೆಚ್ಚು ಅಚ್ಚೊತ್ತಿರ್ದವಿರಳ ಪರಿ ಸುಖವನೇನೆಂಬೆನವ್ವ ! ಸದ್ಭಾವಾಲಯದಲ್ಲಿ ಸಮರಸಚತುಷ್ಟಿಕಳಾಯುಕ್ತದಿಂ ಸತ್ಕೂಟ ಸನುಮತವೆನಿಸುವ ಅನುಪಮ ಸುಖರತಿಯೊಳ್ಮುಳುಗಿದ ಅಗಣಿತದುನ್ನತಿಯನೇನೆಂಬೆನವ್ವ ! ನಿಜಾಲಯದಲ್ಲಿ ನಿತ್ಯನಿಬ್ಬೆರಗು ಪರವಶ ಪರಿಪೂರ್ಣವೆಂಬ ಅಖಂಡ ಚತುಷ್ಟಿಕಳಾಯುಕ್ತದಿಂ ಅಭಿನ್ನಸಂಯೋಗದತಿಶಯದಾನಂದದೊಳ್ಮುಳುಗಿದ ಘನಸುಖದುನ್ನತಿಯ ಗುರುನಿರಂಜನ ಚನ್ನಬಸವಲಿಂಗದೊಳಗೆ ಏನೆಂಬೆನವ್ವ !
--------------
ದೇಶಿಕೇಂದ್ರ ಸಂಗನಬಸವಯ್ಯ
ಧರೆಯಾಕಾಶದ ಮೇಲೆ ಒಬ್ಬ ಸೂಳೆ ನಿಂದು, ಪರಿಪರಿಯ ತೋರುತಿರ್ಪಳು ನೋಡಾ. ಆ ಸೂಳೆಯ ಗೃಹದಲ್ಲಿ ಸಾಸಿರಕೋಟಿ ಕಿರಣವ ಕಂಡೆ ನೋಡಾ ಝೇಂಕಾರ ನಿಜಲಿಂಗಪ್ರಭುವೆ.
--------------
ಜಕ್ಕಣಯ್ಯ
ಅಯ್ಯ! ಅಂಗಾಚಾರವುಳ್ಳ ಶಕ್ತಿ-ಭಕ್ತ-ಜಂಗಮದ ಗೃಹದಲ್ಲಿ ಲಿಂಗಾಚಾರವುಳ್ಳ ಶಿವಭಕ್ತಿ-ಶಿವಭಕ್ತ-ಶಿವಜಂಗಮವು ಜಿಹ್ವಾಲಂಪಟಕಿಚ್ಛೈಸಿ ಅವರ ಗೃಹದಲ್ಲಿ ಲಿಂಗಾರ್ಚನೆ-ಲಿಂಗಾರ್ಪಣವ ಮಾಡಲಾಗದು. ಇದ ಮೀರಿ ಅಂಗಭೋಗಿಗಳ ಸಮಪಾಕ, ಸಮಭಾಜನ, ಸಮಪಂಕ್ತಿ, ಶಿವಮಂತ್ರ, ಶಿವಪ್ರಸಾದ, ಶಿವಾನುಭಾವಗೋಷಿ*ಯ ಮಾಡಿದಡೆ ಬಸವ ಮೊದಲಾದ ಸಮಸ್ತಗಣಸಾಕ್ಷಿಯಾಗಿ ಶಿವಲೋಕ, ಶಾಂಭವಲೋಕ, ರುದ್ರಲೋಕ, ದೇವಲೋಕ, ಮತ್ರ್ಯಲೋಕ ಮೊದಲಾದ ಸಮಸ್ತಲೋಕಪಾವನಾರ್ಥ ಮಹಾಗಣಂಗಳ ಸಮಯಾಚಾರಕ್ಕೆ ಹೊರಗೆಂದಾತನಂಬಿಗರ ಚೌಡಯ್ಯನು.
--------------
ಅಂಬಿಗರ ಚೌಡಯ್ಯ
ಉದಾಸೀನವ ಮಾಡದ[ಮಾಡಿದ?] ಭಕ್ತರ ಮಂದಿರದಲ್ಲಿ ಹೊಕ್ಕು ಲಿಂಗಾರ್ಚನೆಯ ಮಾಡುವ ಜಂಗಮದ ಪರಿಯಾಯವೆಂತೆಂದಡೆ; ಆ ಭಕ್ತನ ಗೃಹದಲ್ಲಿ ಕರ್ತನಾಗಿ ನಿಂದು ಭಾಂಡಭಾಜನಂಗಳ ಮುಟ್ಟಿ ಸೇವೆಯ ಮಾಡುವ ಆ ಭಕ್ತನ ಸತಿಸುತಮಾತೆ ಸಹೋದರ ಬಂಧುಜನ ಭೃತ್ಯ ದಾಸಿಯರು ಮೊದಲಾದ ಸರ್ವರೂ ಲಿಂಗಾರ್ಚಕ ಶ್ರೇಷ*ರು ಪಾದೋದಕ ಪ್ರಸಾದ ವಿಶ್ವಾಸ ಭಕ್ತಿಯುಕ್ತರೆಂಬುದನರಿದು ಅಂದಂದಿಂಗವರ ಹೊಂದಿ ಮುಂದುಗೊಂಡಿರ್ಪ ತಾಮಸಗಳನ್ನು ಹಿಂದುಗಳವುತ್ತ ಸತ್ಯ ಭಕ್ತಿಯನು ಬಂದ ಪದಾರ್ಥವನು ಪ್ರಸಾದವೆಂದೇ ಕಂಡು ಕೈಕೊಂಡು ಲಿಂಗಾರ್ಪಿತ ಘನಪ್ರಸಾದಭೋಗಿಯಾಗಿ ತನ್ನ ಒಕ್ಕುದ ಮಿಕ್ಕುದನಾ ಭಕ್ತಜನಕಿಕ್ಕಿ ತನ್ನಲ್ಲಿ ಒಡಗೂಡಿಕೊಂಡು ಸಲುಹಬಲ್ಲ ಜಂಗಮವೇ ಜಗತ್‍ಪಾವನ. ಇನಿತಲ್ಲದೆ ಅವರು ನಡೆದಂತೆ ನಡೆಯಿಲಿ, ಅವರು ಕೊಂಡ ಕಾರಣ ನಮಗೇಕೆಂದು ಆ ಭಕ್ತಜನಂಗಳಲ್ಲಿ ಹೊದ್ದಿರ್ದ ತಾಮಸಂಗಳನು ಪರಿಹರಿಸದೆ ತನ್ನ ಒಡಲುಕಕ್ಕುಲತೆಗೆ ಉಪಾಧಿಯ ನುಡಿದು ತಮ್ಮ ಒಡಲ ಹೊರೆವ ದರುಶನಜಂಗುಳಿಗಳೆಲ್ಲರೂ ಜಂಗಮಸ್ಥಲಕ್ಕೆ ಸಲ್ಲರು. ಅದೆಂತೆಂದೊಡೆ; ತಾಮಸಂ ಭಕ್ತಗೇಹಾನಾಂ ಶ್ವಾನಮಾಂಸಸಮಂ ಭವೇತ್ ಇತಿ ಸಂಕಲ್ಪ್ಯ ಭುಂಜಂತಿ ತೇ ಜಂಗಮಾ ಬಹಿರ್ನರಾಃ ಶ್ವಾಪಿಂಡಂ ಕುರುತೇ ಯೇನ ಲಾಂಗೂಲೇ ಚಾಲನಂ ಯಥಾ. ಉಪಾಧಿಜಂಗಮಂ ಯಸ್ಯ ತಸ್ಯ ಜೀವೇಶ್ಚ ಗಚ್ಛಯೇತ್ ಇಂತೆಂದುದಾಗಿ ಇದು ಕಾರಣ ತಾಮಸವಿಡಿದು ಮಾಡುವಾತ ಭಕ್ತನಲ್ಲ. ಆ ತಾಮಸ ಮುಖದಿಂದ ಮಾಯೋಚ್ಛಿಷ*ವ ಕೊಂಡಾತ ಜಂಗಮವಲ್ಲ ಅವರೀರ್ವರನ್ನು ಕೂಡಲಚೆನ್ನಸಂಗಯ್ಯ ಇಪ್ಪತ್ತೆಂಟುಕೋಟಿ ನರಕದಲ್ಲಿಕ್ಕುವ.
--------------
ಚನ್ನಬಸವಣ್ಣ
ಅಯ್ಯಾ ಪಾದಪೂಜೆಯೆಂಬುದು ಅಗಮ್ಯ ಅಗೋಚರ ಅಪ್ರಮಾಣ ಅಸಾಧ್ಯ. ಶ್ರೀಗುರು ಬಸವೇಶ್ವರದೇವರು ತಮ್ಮ ಅಂತರಂಗದೊಳಗಣ ಪಾದಪೂಜೆಯಿಂದಾದ ತೀರ್ಥಪ್ರಸಾದವ `ಗಣಸಮೂಹಕ್ಕೆ ಸಲ್ಲಲಿ' ಎಂದು ನಿರ್ಮಿಸಿ, ಭಕ್ತಿಯ ತೊಟ್ಟು ಮೆರೆದರು. ಇಂತಪ್ಪ ತೀರ್ಥಪ್ರಸಾದವ ಸೇವಿಸುವ ಕ್ರಮವೆಂತೆಂದಡೆ; ಗ್ರಾಮಸೇವಾದಿಸಂರಂಭನೃತ್ಯಗೀತಾದಿ ವರ್ಜಿತಃ ಅನಾಚಾರವಿಹೀನೋ ಯೋ ತಸ್ಯ ತೀರ್ಥಂ ಪಿಬೇತ್ ಸದಾ ಇಂತೆಂದುದಾಗಿ, ತಂಬೂರಿ ಕಿನ್ನರಿವಿಡಿದು ಮನೆಮನೆಯ ಬೇಡುವಾತ ಹಲವು ವೇಷವ ತೊಟ್ಟು ಆಡುವಾತ, ನಗಾರಿ ಸಮ್ಮೇಳ ಕರಣೆ ಕಹಳೆ ಶಂಖ ಬಾರಿಸುವಾತ ಅಷ್ಟಾವರಣ ಪಂಚಾಚಾರದಲ್ಲಿ ಅಹಂಕರಿಸುವಾತ ಅನಾಚಾರಿ. ಪರ್ವತದ ಕಂಬಿ ಮಹಾಧ್ವಜವ ಹೊರುವಾತ ರಾಜಾರ್ಥದಲ್ಲಿ ಅಹುದ ಅಲ್ಲವ ಮಾಡಿ, ಅಲ್ಲವ ಅಹುದ ಮಾಡುವಾತ ಅನಾಚಾರವ ಹೇಳುವಾತ ಸದಾಚಾರದಲ್ಲಿ ತಪ್ಪುವಾತ ಭಕ್ತಗಣಂಗಳ ನಿಂದೆಯ ಮಾಡುವಾತ ಸದಾಚಾರಸದ್ಭಕ್ತಗಣಂಗಳ ಕಂಡಡೆ ಗರ್ವಿಸುವಾತ ಧಾನ್ಯ ಅರಿವೆ ಬೆಳ್ಳಿ ಬಂಗಾರಂಗಳ ಕ್ರಯವಿಕ್ರಯದಲ್ಲಿ ವಂಚಿಸುವಾತ ಗುರುಹಿರಿಯರಲ್ಲಿ ಹಾಸ್ಯರಹಸ್ಯವ ಮಾಡುವಾತ ಪರದೈವ ಪರಧನ ಪರಸ್ತ್ರೀ ಗಮಿಸುವಾತ ಸೂಳೆ ಬಸವಿಯರ ಗೃಹದಲ್ಲಿ ಇರುವಾತ ಆಚಾರಭ್ರಷ್ಟ ಮಾನಹೀನರ ಸಂಗವ ಮಾಡುವಾತ, ದುರುಳು ಮಂಕು. ಅವರ ಗುರುಲಿಂಗಜಂಗಮವೆಂದು ನುಡಿಯಲಾಗದು. ಅದೆಂತೆಂದಡೆ : ಖೇಟಕೋ ದಂಡಚಕ್ರಾಸಿಗದಾತೋಮರಧಾರಿಣಃ ಜಂಗಮಾ ನಾನುಮಂತವ್ಯಾಃ ಸ್ವೀಯಲಕ್ಷಣಸಂಯುತಾಃ ಆಶಾತೋ ವೇಷಧಾರೀ ಚ ವೇಷಸ್ಯ ಗ್ರಾಸತೋಷಕಃ ಗ್ರಾಸಶ್ಚ ದೋಷವಾಹೀ ಚ ಇತಿ ಭೇದೋ ವರಾನನೇ ಅನಾಚಾರವಿಭಾವೇನ ಸದಾಚಾರಂ ನ ವರ್ಜಯೇತ್ ಸದಾಚಾರೀ ಸುಭಕ್ತಾನಾಂ ಪಾದತೀರ್ಥಪ್ರಸಾದಕಃ ಮಹಾಭೋಗಿ ಮಹಾತ್ಯಾಗೀ ಲೋಲುಪೋ ವಿಷಯಾತುರಃ ಯಸ್ತ್ವಂಗವಿಹೀನಃ ಸ್ಯಾತ್ತಸ್ಯ (ಪಾದ) ತೀರ್ಥಂ[ನ]ಸೇವಯೇತ್ ಕುಷಿ*ೀ ಕರಣಹೀನಶ್ಚ ಬಧಿರಃ ಕಲಹಪ್ರಿಯಃ ವ್ಯಾಧಿಭಿಸ್ತ್ವಂಗಹೀನೈಶ್ಚತೈರ್ನ ವಾಸಂ ಚ ಕಾರಯೇತ್ ಇಂತೀ ದುರ್ಮಾರ್ಗ ನಡತೆಗಳಿಲ್ಲದೆ, ಅಯೋಗ್ಯವಾದ ಜಂಗಮವನುಳಿದು, ಯೋಗ್ಯಜಂಗಮವ ವಿಚಾರಿಸಿ ತನು ಮನ ಧನ ವಂಚನೆಯಿಲ್ಲದೆ ಸಮರ್ಪಿಸಿ ಅವರ ತೀರ್ಥಪ್ರಸಾದವ ಕೈಕೊಳ್ಳಬೇಕಲ್ಲದೆ ದುರ್ಮಾರ್ಗದಲ್ಲಿ ಆಚರಿಸುವಾತನಲ್ಲಿ ತ್ರಿಣೇತ್ರವಿದ್ದಡೆಯೂ ತೀರ್ಥಪ್ರಸಾದ ಉಪದೇಶವ ಕೊಳಲಾಗದು ಕಾಣಾ. ಕೂಡಲಚೆನ್ನಸಂಗಮದೇವ ಸಾಕ್ಷಿಯಾಗಿ ಗುರುವಚನವ ತಿಳಿದು ನೋಡಾ ಸಂಗನಬಸವಣ್ಣಾ.
--------------
ಚನ್ನಬಸವಣ್ಣ
ಇರುಳು ಹಗಲೆಂದರಿಯದ ಅಂಧಕನ ಕೈಯಲ್ಲಿ ಕೈದೀವಿಗೆ ಇರ್ದಡೇನು, ಪಥಿವ ನೋಡಿ ನಡೆಯಬಲ್ಲನೆ ? ಗುರುಚರಪರವನರಿಯದ ದುರಾಚಾರಿಯ ಕೈಯಲ್ಲಿ ಲಿಂಗವಿರ್ದಡೇನು, ಅವ ಸತ್ಯಸದಾಚಾರವನುಳ್ಳ ಭಕ್ತಿವಂತರಿಗೆ ಸರಿಯಹನೆ ? ಅವನು ಶಿವಭಕ್ತನಾಗಿ ಕೆಟ್ಟುಹೋದ ತೆರನೆಂತೆಂದಡೆ: ಭಕ್ತರ ಗೃಹದಲ್ಲಿ ತುಡುಗ ತಿಂದ ನಾಯಿ, ಮರಳಿ ಮತ್ತೆ ಹೊಲಸಿಂಗೆರಗಿದ ತೆರನಾಯಿತೆಂದ ಕಲಿದೇವಯ್ಯ.
--------------
ಮಡಿವಾಳ ಮಾಚಿದೇವ
ಗುರುಮಾರ್ಗಾಚಾರ ಲಿಂಗಾಂಗಸಂಗಯೋಗಸಂಪನ್ನರೆಂದು ಉತ್ರಪತ್ರಂಗಳ ಲಿಖಿತಂಗೈದು, ತನ್ನ ಗೃಹದಲ್ಲಿ ತನ್ನ ಪಿತ-ಮಾತೆಯಾದ ಗುರುಚರಕ್ಕೆ ಒಂದು ಪಾಕ, ತನಗೊಂದು ಪಾಕ ಮಾಡಿಸಿಕೊಂಡು, ಉದರಮಂ ಹೊರೆದು, ಪ್ರಸಾದಿಗಳೆನಿಸಿ, ಗುರುಚರ ಬಂದಾಗ್ಗೆ ತಂಗಳ ನೀಡಿ, ಅವರಿಲ್ಲದಾಗ ಬಿಸಿಯನುಂಡು, ಮತ್ತೊಬ್ಬರಿಗೆ ಆಚಾರವ ಹೇಳಿ, ತಾನನಾಚಾರಿಯಾಗಿ ಸತ್ಕ್ರಿಯಾಸಮ್ಯಜ್ಞಾನವ ಮರೆದು, ಮಹಾಜ್ಞಾನಪರಿಪೂರ್ಣರೆನಿಸಿ, ತ್ರಿವಿಧಪ್ರಸಾದಪಾದೋದಕವರಿಯದವರಲ್ಲಿ ಸಮರಸಕ್ರಿಯೆಗಳಂ ಬಳಸಿ, ಡಂಬಕತನದಿಂದೊಡಲುಪಾಧಿವಿಡಿದು, ತಥ್ಯ ಮಿಥ್ಯ ತಾಗು ದೋಷ ಕಠಿಣ ನುಡಿಗಳ ಬಳಕೆಯಲ್ಲಿರ್ಪುದೆ ಅಂತರಂಗದ ದ್ವಿತೀಯಪಾತಕ ಕಾಣಾ ನಿರವಯಪ್ರಭು ಮಹಾಂತ ಸಿದ್ಧಮಲ್ಲಿಕಾರ್ಜುನಲಿಂಗೇಶ್ವರ.
--------------
ಮೂರುಸಾವಿರ ಮುಕ್ತಿಮುನಿ
ಕೇವಲ ಸದ್ರೂಪಮಾದ ನಿಷ್ಕಳಶಿವತತ್ವವು ತನ್ನೊಳ್ತಾನೇ ಪ್ರಕಾಶಿಸುತ್ತಿರ್ಪುದರಿಂ ಪರಮಾತ್ಮನೆಂಬ ಸಂಜ್ಞೆಯಿಂ ತನ್ನ ನಿಜಮಹಾತ್ಮ್ಯ ಪ್ರಕಟನೆಗೋಸುಗ ತಾನೇ ಆತ್ಮನಾಗಿ, ಆತ್ಮನೇ ಆಕಾಶವಾಗಿ, ಆಕಾಶವೇ ವಾಯುವಾಗಿ, ವಾಯುವೇ ಅಗ್ನಿಯಾಗಿ, ಅಗ್ನಿಯೇ ಜಲಮಾಗಿ, ಆ ಜಲವೇ ಪೃಥ್ವೀರೂಪವಾಗಿ ಘÀಟ್ಟಿಕೊಂಡು ಆ ಪೃಥ್ವಿಗೆ ಜಲವೇ ಕಾರಣಮಾಗಿ, ಆ ಜಲಕಗ್ನಿಯೇ ಕಾರಣಮಾಗಿ, ಆ ಅಗ್ನಿಗೆ ವಾಯುವೇ ಕಾರಣಮಾಗಿ, ಆ ವಾಯುವಿಗೆ ಆಕಾಶವೇ ಕಾರಣಮಾಗಿ, ಆ ಆಕಾಶಕ್ಕಾತ್ಮನೇ ಕಾರಣಮಾಗಿ, ಆ ಆತ್ಮನಿಗೆ ಪರಮಾತ್ಮನೇ ಕಾರಣಮಾಗಿ, ಒಂದಕ್ಕೊಂದು ತಮ್ಮಲ್ಲಿಯೇ ತಾವು ಸೃಷ್ಟಿ ಸ್ಥಿತಿ ಸಂಹಾರಂಗಳಿಗೆ ಕಾರಣಮಾಗಿರ್ಪ, ಆತ್ಮಾದಿ ಷಡ್ಭೂತಂಗಳಿಗೆ ತಾನೇ ಚೈತನ್ಯ ಸ್ವರೂಪಮಾಗಿರ್ಪ ಪರಮನು ಆತ್ಮಸಂಗದಿಂ ಜೀವಕೋಟಿಗಳಂ ಸೃಷ್ಟಿಸಿ, ಕರ್ಮಕ್ಕೆ ಕಾರಣಮಂ ಮಾಡಿ ಕ್ರೀಡಿಸುತ್ತಿರ್ದನದೆಂತೆಂದೊಡೆ: ಜಲವು ತಾನೇ ಪೃಥ್ವೀಸ್ವರೂಪಮಾಗಿ ಬಲಿದು, ಆ ಪೃಥ್ವಿಯನ್ನೇ ತನಗಾಧಾರವಂ ಮಾಡಿಕೊಂಡು, ತಾನೇ ಪೃಥ್ವಿಗೆ ಆಧಾರಮಾಗಿ, ಪೃಥ್ವಿಯಂ ಪರಿವೇಷಿ*ಸಿರ್ಪ ಜಲವೇ ಪತಿಯಾಗಿ, ಪೃಥ್ವಿಯಲ್ಲಿ ಪರಿವ ಜಲವೇ ಸತಿಯಾಗಿರ್ಪ ಆ ಜಲಬಂಧದಿಂ ಕುಡ್ಯ ಸೌಧ ಗೃಹಾದಿ ನಾನಾಸ್ವರೂಪಂಗಳಾಗಿ ನಿಂತು, ತನ್ನಲ್ಲಿರ್ಪ ಜಲವಾರಿಹೋಗಲು, ಆ ಸೃಷ್ಟಿಶಕ್ತಿಯಿಂ ತಾಂ ಘಟ್ಟಿಕೊಂಡು, ಜೀವರಿಗೆ ಜಲಹಿಂಸೆಯಂ ನಿವಾರಣಮಾಡುತ್ತಾ, ಆ ಜಲದಿಂದಲ್ಲೇ ತಾನು ಲಯವನೈದುತ್ತಿರ್ದಂದದಿ, ಆ ಪರಮಾತ್ಮನೇ ಆತ್ಮನಂ ಸುತ್ತಿ, ಆತ್ಮನಲ್ಲೇ ಸುಳಿದು, ತಾನೇ ಶಿವಶಕ್ತಿಸ್ವರೂಪಮಾಗಿ, ತನ್ನಿಂದ ಬುದ್ಧಮಾಗಿರ್ಪ ಆತ್ಮಪದಾರ್ಥದಲ್ಲಿ ಜೀವಜಾಲಂಗಳಂ ಸೃಷ್ಟಿಸಿ, ಪೃಥ್ವಿಯಲ್ಲಿ ಬೆಳೆದ ಬೆಳೆಯನ್ನು ಗೃಹದಲ್ಲಿ ತುಂಬಿ, ಶರೀರದಿಂದ ಅನುಭವಿಸುವಂದದಿ ಆತ್ಮನಿಂದ ಬೆಳೆದ ಕರ್ಮದ ಬೆಳಸನ್ನು ಜೀವಂಗಳಲ್ಲಿ ತುಂಬಿ, ತದನುಭವಕ್ಕೆ ತಾನೇ ಕಾರಣಮಾಗಿ, ನಿಜಮಹಾತ್ಮ್ಯ ಪ್ರಕಟನಮಂ ಮಾಡಿಯಾಡುತಿರ್ಪಭವನೆ ನಿನ್ನ ಸಂಬಂಧಮಾಗಿರ್ಪುದಂ ಭಾವದಲ್ಲಿ ತಿಳಿದುನೋಡಿದಲ್ಲಿ, ಎಲ್ಲವೂ ನೀನಾಗಿರ್ಪೆಯಲ್ಲದೆ, ಪೆರೆತೊಂದುಂಟೇನಯಾ? ನಿನ್ನ ಕ್ರೀಡಾನಿಮಿತ್ತ ನಾನೆಂಬ ಬರಿಯ ಭ್ರನೆಯಂ ಸೃಷ್ಟಿಸಿ, ಕಷ್ಟಬಡಿಪುದೊಳ್ಳಿತ್ತೇನಯ್ಯಾ? ಅರಿತವನ ಮುಂದೆ ಇಂದ್ರಜಾಲವಂ ಮಾಡಲು ಪರಿಶೋಭಿಸಬಲ್ಲುದೆ? ನಿನ್ನ ಮಾಯೆಯೆನಗೆ ಮನೋರಥಮಾಗಬಲ್ಲುದೆ? ಬೇರ ಬಲ್ಲವಂಗೆ ಎಲೆಯಂ ತೋಋಹೋದರೆ, ಅಪಹಾಸ್ಯಕಾರಣಮಾಗಿಹುದು. ಇದನರಿತು ನನ್ನಂ ಕಾಡದಿರು ಕಂಡ್ಯಾ ಮಹಾಘನ ದೊಡ್ಡದೇಶಿಕಾರ್ಯಗುರುಪ್ರಭುವೆ.
--------------
ಮುಮ್ಮಡಿ ಕಾರ್ಯೇಂದ್ರ /ಮುಮ್ಮಡಿ ಕಾರ್ಯ ಕ್ಷಿತೀಂದ್ರ
ಮನೆಯೆನ್ನದು, ತನುವೆನ್ನದು, ಧನವೆನ್ನದೆನ್ನೆನಯ್ಯಾ. ಮನ ನಿಮ್ಮದು, ತನು ನಿಮ್ಮದು, ಧನ ನಿಮ್ಮದು ಎಂದಿಪ್ಪೆನಯ್ಯಾ. ಸತಿಯಾನು, ಪತಿಯುಂಟು, ಸುಖ ಉಂಟೆಂಬುದ ಮನ, ಭಾವದಲ್ಲಿ ಅರಿದೆನಾದಡೆ, ನಿಮ್ಮಾಣೆಯಯ್ಯಾ. ನೀನಿರಿಸಿದ ಗೃಹದಲ್ಲಿ ನಿನ್ನಿಚ್ಫೆಯವಳಾಗಿಪ್ಪೆನಲ್ಲದೆ ಅನ್ಯವನರಿಯೆ ಕಾಣಾ ಚೆನ್ನಮಲ್ಲಿಕಾರ್ಜುನಾ.
--------------
ಅಕ್ಕಮಹಾದೇವಿ
ದಯದಿಂದ ನೋಡಿ ಬಹು ವಿಚಾರವುಂಟು. ಷಟ್ಸ ್ಥಲಬ್ರಹ್ಮಚಾರಿ ತಾನು ಸಂಕಲ್ಪವನೇತಕ್ಕೆ ಮಾಡುವದು? ಗುರುವು ಹಿಡಿದು ಲಿಂಗವಾಯಿತ್ತು. ಲಿಂಗ ಹಿಡಿದು ಜಂಗವಾಯಿತ್ತು. ಜಂಗಮವು ಹಿಡಿದು ಪಾದೋದಕ ಪ್ರಸಾದವಾಯಿತ್ತು. ಇದನರಿಯದೆ ಭಿನ್ನಭೇದವ ಮಾಡಲಾಗದು. ಜಂಗಮನ ಕೊಂದವನಾದರು, ಲಿಂಗವ ಭಿನ್ನವ ಮಾಡಿದವನಾದರು, ಅವನ ಕಂಡು ಮನಸ್ಸಿನಲ್ಲಿ ನಿಂದಿಸಿದರೆ ವಿರಕ್ತನೆಂಬ ಭಾವನೆಯಿಲ್ಲ. ಭಕ್ತನ ಮಠವೆಂದು ಹೋದಲ್ಲಿ, ಆ ಭಕ್ತನು ಎದ್ದು ನಮಸ್ಕರಿಸಿ, ತನ್ನ ದಾಸಿಯರ ಕರದು `ಪಾದಾರ್ಚನೆಯ ಮಾಡು' ಎಂದರೆ ಆ ಪಾದಾರ್ಚನೆಯ ಮಾಡಿದ ಫಲವು ಅರಿಗೆ ಮೋಕ್ಷವಾಗುವದು? ಆ ತೊತ್ತಿನ ಬಸುರಲ್ಲಿ ಬಪ್ಪುದು ತಪ್ಪದು. ತಾನು ವಿರಕ್ತನಾದ ಮೇಲೆ, ಲಿಂಗವಿದ್ದವರಲ್ಲಿ ಲಿಂಗಾರ್ಪಿತವ ಬೇಡಲೇತಕ್ಕೆ? ತಾ ಬಿರಿದ ಕಟ್ಟಿ ಆಚರಿಸುವ ಶರಣನು ತನಗೆ ಸಮಾಚಾರ ಸಮನಾಗದಲ್ಲಿ ಹೊನ್ನ ಹಿಡಿದು ಬಡ್ಡಿ ವ್ಯವಹಾರವ ಮಾಡಿದ ಜಂಗಮದಲ್ಲಿ ತೆಗೆದುಕೊಳ್ಳಲಾಗದು. ಆ ಜಂಗಮವು ತ್ರಿವಿಧ ಪದಾರ್ಥದಲ್ಲಿದ್ದರೇನು? ವಂಚನೆಯಿಲ್ಲದೆ ಸವದರೆ ಆತ ಮುಟ್ಟಿದರೊಳಗಿಲ್ಲ. ಆತನ ಅಂತು ಇಂತು ಎನ್ನಲಾಗದು ಶರಣರಾಚರಣೆ. ಶರಣ ತಾ ಬಿರಿದ ಕಟ್ಟಿ ಆಚರಿಸಿದಲ್ಲಿ ತನ್ನಾಚರಣೆಗೆ ಕೊರತೆ ಬಂದರೆ ಬಂದಿತ್ತೆಂಬ ಹೇಹ ಬೇಡ. ಬಂದಾಗ ನರಳಿ, ಬಾರದಾಗ ಸದಾಚಾರದಲ್ಲಿರ್ಪುದೆ ಶರಣನಾಚರಣೆ. ಗುರು ಮೋಕ್ಷವಾಗಿಯಿಪ್ಪಾತನು ಪಾಪಕ್ಕೆ ಸಂಬಂಧವಾಗಲು ಆತನ ಕಂಡು ಮನದಲ್ಲಿವ ದ್ರೋಹಿಯೆಂದರೆ ನನ್ನ ಬಿರಿದಿಂಗೆ ಕೊರತೆಯದಾಗುವುದಲ್ಲದೆ ವಿರಕ್ತನೆಂಬ ಭಾವವೆನಗಿಲ್ಲ ನೋಡಾ. ಮುಂದೆ ಕ್ರಿಯಾಚರಣೆ. ವಿರಕ್ತನ ನಡೆಯೆಂತೆಂದೊಡೆ ಭಕ್ತಿಸ್ಥಲ ಸಂಬಂಧವಾದ ಭಕ್ತಂಗೆ ಕ್ರೀಯವ ಕೊಡುವ ಆಚರಣೆಯೆಂತೆಂದೊಡೆ ಆತ ತೆಗೆದು ಕೊಂಬ ಆಚರಣೆಯೆಂತೆಂದೊಡೆ ಪಾದಾರ್ಚನೆಯ ಮಾಡಿದಲ್ಲಿ ಪಾದತೀರ್ಥ ಕೊಡುವರು. ಅನ್ನವ ನೀಡಿದ ಹಂಗಿನಲ್ಲಿ ಪ್ರಸಾದವಂ ಕೊಡುವವರು. ಮುಯ್ಯಿಂಗೆ ಮುಯ್ಯನಿತ್ತುದಲ್ಲದೆ ಮುಕ್ತಿಯೆಂಬುದು ಅವುದು ಹೇಳ? ಭಕ್ತನಾಚಾರಣೆಯೆಂತೆಂದೊಡೆ- ಆ ಗೃಹಕ್ಕೆ ಹೋದಲ್ಲಿ ತಾ ಲಿಂಗಪೂಜೆಯ ಮಾಡುತ್ತಿರ್ದರಾದರು ತಾಯೆದ್ದು ಬಂದು ನಮಸ್ಕರಿಸುವದೆ ಭಕ್ತನ ಮಾರ್ಗ. ಎನ್ನೊಳಗೆ ಲಿಂಗವು ಜಂಗಮವು ಉಂಟೆಂಬ ಅವಿಚಾರದ ನುಡಿಯ ಕೇಳಲಾಗದು. ಮುಂದೆ ಭಕ್ತನು ಜಂಗಮದ ಪಾದವ ಹಿಡಿದಲ್ಲಿ ಪುಷ್ಪ ವಿಭೂತಿಯಿರಲು ಅಗ್ಛಣಿಯಿಲ್ಲದಿರಲು ಮರ್ಲೆದ್ವು ವ್ರತಸ್ಥಪಾದವ ಬಿಡಲಾಗದು. ಬಿಟ್ಟನಾದರೆ ಪಾದತೀರ್ಥಕ್ಕೆ ದೂರವಾಯಿತ್ತು. ಲೋಕಾಚಾರದ ಭಕ್ತರು ಪಾದವ ಹಿಡಿಯಲು, ಪುಷ್ಪ ವಿಭೂತಿಯಿರಲು ಅಗ್ಘಣಿಯಿಲ್ಲದಿರಲು ಆ ಪಾದಕ್ಕೆ ನಮಸ್ಕಾರವ ಮಾಡಿ ಪಾದವಂ ಬಿಟ್ಟು ಮತ್ತೆ ಹೋಗಿ ಅಗ್ಘಣಿಯಂ ತಂದು ಪಾದತೀರ್ಥವಂ ಪಡೆದು ಸಲಿಸುವುದು ಭಕ್ತನಾಚರಣೆ. ಜಂಗಮದೇವರ ಕರತಂದು ವ್ರತಸ್ಥನ ಪಾದತೀರ್ಥವಂ ಪಡೆದಲ್ಲಿ ಆ ಆ ದೇವರ ಸೆಜ್ಜೆಯಲ್ಲಿ ಲಿಂಗವಿಲ್ಲದಿರಲು ಆ ದೇವರು ಮಜ್ಜನವ ನೀಡಿದ ಸ್ಥಾನ ಅವರು ಮೂರ್ತಿಮಾಡಿರ್ದ ಸ್ಥಾನವ ನೋಡಿ ಆ ವ್ರತಸ್ಥನು ಪ್ರಾಣವ ಕೊಡುವುದು. ಭಕ್ತನು ಜಂಗಮವ ಕರಕೊಂಡು ಬಂದು ಪಾದತೀರ್ಥಮಂ ಪಡೆದು ಆ ಜಂಗಮದೇವನ ಸೆಜ್ಜೆಯಲ್ಲಿ ಲಿಂಗವಿಲ್ಲದಿರಲು ಅವರು ಮಜ್ಜನವ ನೀಡಿದ ಸ್ಥಾನದಲ್ಲಿ ಮೂರ್ತಿಗೊಂಡಿರ್ದ ಸ್ಥಾನದಲ್ಲಿ ಪರಾಂಬರಿಸಿ ಆ ಲಿಂಗವು ಸಿಕ್ಕಿದರೆ ಕ್ರೀಯವ ಜಂಗಮವು ಭಕ್ತರು ಸಲಿಸುವುದು, ಇಲ್ಲದಿದ್ದರೆ ಆ ಭಕ್ತರು ತೆಗೆದು ಕೊಂಬುದು. ಆ ಜಂಗಮವು ತೆಗೆದು ಕೊಳಲಾಗದು. ಇದು ಸಕಲ ಶರಣರಿಗೆ ಸನ್ಮತ. ಸಂಕಲ್ಪವ ಮಾಡಲಾಗದು ಮುಂದೆ ಮಾರ್ಗಕ್ಕೆ ತಾನು ನಡೆದಲ್ಲಿ ತನಗೆ ಮಾರ್ಗ ತಪ್ಪದು. ತನಗೆವೊ[ಂ]ದು ವೇಳೆ ಲಿಂಗವು ಭಿನ್ನ ಭಿನ್ನವಾಗಲು ಅದನು ಸಕಲ ಸಮಸ್ತಮೂರ್ತಿಗಳು ತಿಳಿದು ನೋಡಲು ಅದರಲ್ಲಿ ಭಿನ್ನ ಭಿನ್ನವಾಗದೆಯಿರಲು ಪರಾಂಬರಿಸಿ ಎಲ್ಲಾ ಮಾಹೇಶ್ವರರು ಎದ್ದು ಬಂದು ಅದರೊಳಗೆ ಸಂಕಲ್ಪವಿಲ್ಲವೆಂದು ನಮಸ್ಕಾರವ ಮಾಡುವುದು. ಲಿಂಗವು ಭಿನ್ನವಾಗಲು `ನಿಮ್ಮ ಗುರುಮಠಪೂರ್ವಕ್ಕೆ ಹೋಗಿ'ಯೆಂದು ಹೇಳಲು, `ನಾನೊಲ್ಲೆ, ನಿಮ್ಮ ಪಾದದಲ್ಲಿಯೇಕಾರ್ಥವ ಮಾಡಿಕೊಳ್ಳಿ'ಯೆಂದು ಹೇಳಲು, ಆ ದೇವರ ಅಡ್ಡಬೀಳಿಸಿಕೊಂಡು ವಸ್ತು ಹೋಗುವ ಪರಿಯಂತರದಲ್ಲಿ ಕಾದಿರುವುದು. ಅಥ[ವ] ಒಂದು ವೇಳೆ ಮೋಸ ಬಂದರೆ ಅಲ್ಲಿರ್ಪ ಭಕ್ತ ಮಾಹೇಶ್ವರರ ಬಿಡುವುದು. ಧರ್ಮಾಧರ್ಮದಲ್ಲಿ ವಿಚಾರಿಸದೆ ಆ ಭಕ್ತನು ಜಂಗಮ ಮುಟ್ಟಿದ ಗದ್ದುಗೆಯಲ್ಲಿ ಮೂರ್ತಿಮಾಡಿ `ಪ್ರಸಾದಕ್ಕೆ ಶರಣಾರ್ಥಿ'ಯೆನಲು ನೀಡಲಾಗದೆಂಬುದು ಆಚರಣೆ. ಆದ ನೀಡಿಯಿಟ್ಟರು ಮುಗಿವಲ್ಲಿ ಭಕ್ತನ ಪ್ರಸಾದ ಹೆಚ್ಚಾದರೆ `ಅಯ್ಯೋ ನನ್ನ ಪ್ರಸಾದ ಹೆಚ್ಚಾಯಿ'ತೆಂದು ಹೇಳಿದರೆ ಆ ಪ್ರಸಾದವನು ನೀಡಿಸಿ ಕೊಂಬ ಜಂಗಮಕ್ಕೆ ಆಚರಣೆ ಸಲ್ಲದು. ವ್ಯಾಪಾರವ ಕೊಟ್ಟು ವ್ಯಾಪಾರವನೊಪ್ಪಿಸಿಕೊಂಡರೆ ನಾವು ಪ್ರಸಾದವ ತೆಗೆದುಕೊಂಬುದು ಆಚರಣೆ. ಹೊನ್ನು ಹೆಣ್ಣು ಮಣ್ಣು ತ್ರಿವಿಧದಲ್ಲಿ ವಂಚನೆಯಿಲ್ಲದಿರ್ಪಡೆ ಅವನ ಹೆಣ್ಣು ಮಣ್ಣು ತ್ರಿವಿಧದಲ್ಲಿ ವಂಚನೆಯಿಲ್ಲದಿರ್ಪಡೆ ಅವನ ಪ್ರಸಾದವನು ತೆಗೆದುಕೊಂಬುದು ಇದು ಜಂಗಮದಾಚರಣೆ. ಗುರುದೀಕ್ಷೆಯಿಲ್ಲದವನು ಲಿಂಗಪೂಜೆಯ ಮಾಡಿದರೆ ಪಾದೋದಕ ಪ್ರಸಾದವ ಕೊಂಡರೆ ಸಹಜವಲ್ಲದೆ ಸಾಧ್ಯವಾಗದು. ಬಿಟ್ಟರಾದರೆ ಅವರಿಗೆ ಮೋಕ್ಷವಿಲ್ಲವು. ಜಂಗಮವು ಆವ ವರ್ತನೆಯಲ್ಲಿ ನಡಕೊಂಡರು [ಆಸ]ತ್ತು `ಬೇಡ ಹೋಗಿ'ಯೆಂದರೆ `ನಾನು ಅರಿಯದೆ ಮಾಡಿದೆ'ನೆಂದರೆ ಅವನನೊಪ್ಪಿಕೊಂಬುದು ಇದಕ್ಕೆ ಕಲ್ಪಿತ ಪಾಪಪುಣ್ಯಕ್ಕೆ ಒಳಗಾದವರು ಷಟ್ಸ ್ಥಲಕ್ಕೆ ಮಾತ್ರ ಆಗದು. ಭಕ್ತಂಗೆ ಪ್ರಸಾದವ ಕೊಡುವ ಆಚರಣೆಯೆಂತೆಂದೊಡೆ- ದೀಕ್ಷೆಯಿಲ್ಲದೆ ಶಿವಭಕ್ತನ ಗೃಹಕ್ಕೆ ಹೋಗಿ `ಭಿಕ್ಷೆ'ಯೆಂದೆನಾದರೆ, ಜಿಹ್ವೆಯ ಮುಕ್ಕುಳಿಸಿದರೆ ಪಾತಕ ನೋಡ. ಗುರುವಚನ ಪ್ರಮಾಣದಲ್ಲಿ ನಾನು ಗುರುಮುಖವ ಹಿಡಿದಲ್ಲಿ ಶಿವಮಂತ್ರಸ್ಮರಣೆಯನು ಶಿವಾನುಭಾವಿಗಳ ಸ್ಥಾನದಲ್ಲಿ ಬೆಸಗೊಂಬುದೆ ಶುದ್ಧವಾಯಿತ್ತು. ಇಲ್ಲದಿದ್ದರೆ ಶುದ್ಧವಿಲ್ಲವು. ಶಿವಶರಣನ ಜ್ಞಾನವೆಂತೆಂದೊಡೆ ನೀರಮೇಲಣ ತೆಪ್ಪದಂತಿರಬೇಕು, ಕ್ಷೀರದೊಳಗಣ ಘೃತದಂತಿರಬೇಕು, ಕೆಸರಿನೊಳಗಣ ತಾವರೆ ಪ್ರಜ್ವಲಿಸಿದಂತಿರಬೇಕು. ಲಿಂಗದೊಳಗೊಡವೆರದರೆ ಆರು ಆರಿಗೆಯು ಕಾಣದಂತೆ ನೋಡಾ. ಅಂದಳದೊಳಗೆ ಹೋಗುವನ ಹಜ್ಜೆಯ ಕಂಡವರಾರು ಹೇಳ? ಮಾತಿನಲ್ಲಿ ಮಹಾಜ್ಞಾನಿಗಳೆಂದರೊಪ್ಪುವರೆ? ಮಹಾಲಿಂಗದ ಬೆಳಗಿನಲ್ಲಿ, ತನ್ನ ನಡೆಯನೊಡವೆರದಿಪ್ಪ ಮಹಿಮಂಗೆ ದುಃಖವಿಲ್ಲ ನೋಡ ಭಕ್ತಿಸ್ಥಲವಾದುದು. ಭಕ್ತನ ಮಾರ್ಗವೆಂತೆಂದೊಡೆ- ತನ್ನ ಗೃಹಕ್ಕೆ ಜಂಗಮವು ಹೋದಲ್ಲಿ ಶುದ್ಧವಲ್ಲದೆ ಇದನರಿಯದೆ ಕಾಡದೈವಕ್ಕೆಲ್ಲ ಹರಕೆಯ ಮಾಡಿ ಆ ದೈವದ ಹೆಸರಿನಲ್ಲಿ ಜಂಗಮವ ಕರೆತಂದು ಉಣಲಿಕ್ಕಿದೆನಾದರೆ ಕಾರಿದ ಕೂಳಿಗಿಂದ ಕನಿಷ* ಕಾಣಾ. ಅನ್ಯ ದೈವದ ಪೂಜೆಯಿಲ್ಲದಾತನೆ ಶಿವಭಕ್ತ ನೋಡಾ. ತನ್ನ ಗುರುವು ಹಸ್ತಕ ಸಂಯೋಗವ ಮಾಡಿ, ಲಿಂಗವ ಧರಿಸಿದ ಬಳಿಕ ಲಿಂಗವಲ್ಲದೆ ಅನ್ಯಪೂಜೆಯೇತಕ್ಕೆ? ಇದನ್ಲರ್ವಿದರಿದು ಮಾಡಿದನಾದರೆ ಪಾತಕವಲ್ಲದೆ ಮತ್ತಿಲ್ಲ ನೋಡಾ. ಮೋಕ್ಷವೆಂಬುದೆಂದಿಗೂ ಇಲ್ಲ ನೋಡಾ. ಹುಟ್ಟುಗೆಟ್ಟು ಬಟ್ಟಬಯಲಾದವನಿಗೆ ದುಃಖವುಂಟೆ?. ಲಿಂಗದಲ್ಲಿ ನಿರ್ಭಯಲಾದವಂಗೆ ಸಂಕಲ್ಪವುಂಟೆ?. ಮಹಾಜ್ಞಾನಿಗೆ ಕತ್ತಲೆಯುಂಟೆ?. ಮಹಾಪ್ರಸಾದಿಗೆ ಸಂಕಲ್ಪಮುಂಟೆ?. ಜ್ಞಾನಿಗಳಿಗೆನ್ನವರು ತನ್ನವರೆಂಬ ಭೇದಮುಂಟೆ?. ಸದ್ಭಕ್ತಿಯುಳ್ಳಾತನು ತನ್ನ ಲಿಂಗವ ಪೂಜಿಸಿ ಅನ್ಯರಮನೆಯಲ್ಲಿ ಭೋಗದಲ್ಲಿದ್ದನಾದರೆ ಶ್ವಾನನ ಬಸುರಲ್ಲಿ ಬರುವು[ದು] ತಪ್ಪದು, ಅರೆಭಕ್ತರಾದವರ ಗೃಹದಲ್ಲಿ ಹೋಗಿ ಅನ್ನವ ಮುಟ್ಟಿದರಾದರೆ, ಅವನಿಗೆ ಗುರುವಿಲ್ಲ. ಮುಕ್ತಿಯೆಂಬುದು ಎಂದೆಂದಿಗೂ ಇಲ್ಲ ನೋಡಾ, ನಿಜಗುರು ಸ್ವತಂತ್ರ ಸಿದ್ಧಲಿಂಗೇಶ್ವರಾ.
--------------
ಸ್ವತಂತ್ರ ಸಿದ್ಧಲಿಂಗ
-->