ಅಥವಾ

ಒಟ್ಟು 40 ಕಡೆಗಳಲ್ಲಿ , 13 ವಚನಕಾರರು , 24 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಅಂಧಕಾರವೆಂಬ ಗಹ್ವರದೊಳಗೆ ನಿದ್ರೆಯೆಂಬ ರಾಕ್ಷಸಿ ಗ್ರಹಿಸಿ, ವೀರರ ನಿಗ್ರಹಿಸಿ ನೀರು ಮಾಡಿ, ದ್ಥೀರರ ಧೃತಿಗೆಡಿಸಿ, ಶಾಪಾನುಗ್ರಹಸಮರ್ಥರ ಸತ್ತಂತಿರಿಸಿ, ನಿಚ್ಚ ನಿಚ್ಚ ಜೀವನಾಶವ ಮಾಡುತ್ತಿಹಳು ನೋಡಾ, ಕೂಡಲಸಂಗಮದೇವಾ.
--------------
ಬಸವಣ್ಣ
ಜಂಗಮಫಲವೆಲ್ಲವೂ ದೇವತೆಗಳಾಹಾರವು; ಸ್ಥಾವರಫಲವೆಲ್ಲವೂ ಮನುಷ್ಯರಾಹಾರವು. ಅದೆಂತೆಂದೊಡೆ : ದೇವತಾಬಿಂದುವಿನಲ್ಲಿ ಮನುಷ್ಯಕೃತ್ಯದಿಂದುದ್ಭವಿಸುವುದೆಲ್ಲ ಸ್ಥಾವರವು; ಮನುಷ್ಯ ಬಿಂದುವಿನಲ್ಲಿ ದೇವತಾ ಕೃತ್ಯದಿಂದುದ್ಭವಿಸುವುದೆಲ್ಲ ಜಂಗಮವು. ಮನುಷ್ಯರು ಶೂದ್ರಮುಖದಿಂ ಕೊಂಬುತಿರ್ಪರು. ದೇವತೆಗಳು ಬ್ರಾಹ್ಮಣಮುಖದಿಂ ಕೊಂಬುತಿರ್ಪರು. ಪೃಥ್ವಿಯಲ್ಲಿ ಎಂಬತ್ತುನಾಲ್ಕುಲಕ್ಷವಿಧ ಜಂಗಮಗಳು ಹೇಗೋ ದೇವತೆಗಳಲ್ಲಿಯೂ ಹಾಗೆ. ದೇವತೆಗಳು ತಮ್ಮ ಕರ್ಮಫಲವು ತೀರಿದೊಡೆ, ತದ್ಧೋಷ ಕರ್ಮಾನುಸಾರಮಾಗಿ ಪಂಚಾಶಲ್ಲಕ್ಷ ದೇಹಗಳೊಂದಂ ಹೊಂದಿ ಆಯಾ ಆಹಾರಂಗಳಂ ಭುಂಜಿಸುತ್ತಾ. ತದಾನುಗುಣ್ಯಮಾಗಿ ಕ್ರೀಡಿಸುತ್ತರ್ಪಂದದಿ, ಮನುಷ್ಯನು ಇಹಲೋಕಕರ್ಮವು ತೀರಿದಲ್ಲಿ ಆ ಕರ್ಮಫಲಕ್ಕೆ ತಕ್ಕ ಮರಣವಂ ಹೊಂದಿ, ದೇವತಾ ಪಿಶಾಚಾಂತಮಾದ ದೇಹಗಳೊಳೊಂದು ದೇಹವನ್ನೆತ್ತಿ, ಸುಖದುಃಖಗಳನನುಭವಿಸುತ್ತಾ ತನ್ನ ಅದ್ಥಿಕಾರಕ್ಕೆ ದೇವತೆಯನ್ನು ಗ್ರಹಿಸಿ, ಆ ದೇವತಾಮುಖದಿಂ ಆಹಾರಂಗಳಂ ಗ್ರಹಿಸುವಂತೆ, ಆ ದೇವತೆಗಳು ತಮ್ಮ ಅದ್ಥಿಕಾರಕ್ಕನುಗುಣವಾಗಿ ಮನುಷ್ಯರಂ ಗ್ರಹಿಸಿ, ಆ ಮನುಷ್ಯಮುಖದಿಂ ಆಹಾರಂಗಳಂ ಕೊಂಬುತಿರ್ಪರು. ದೇವೆತಗಳಿಗೆ ಮಂತ್ರದಿಂದಾವಾಹನೋಚ್ಚಾಟನೆಗಳು, ಮನುಷ್ಯರಿಗೆ ತಂತ್ರದಿಂದಾವಾಹನೋಚ್ಚಾಟನೆಗಳು. ಮನುಷ್ಯರಿಗೆ ತಂತ್ರದಿಂ ಕೂಡಿದ ಮಂತ್ರವು, ದೇವತೆಗಳಿಗೆ ಮಂತ್ರದಿಂ ಕೂಡಿದ ತಂತ್ರವು, ಇಂತು ಮನುಷ್ಯರೂಪದಿಂದ ಸತ್ತು. ದೇವತಾರೂಪದಿಂ ಹುಟ್ಟುತ್ತಿರ್ಪ ದಂದುಗವಂ ಬಿಡಿಸಿ, ನಿನ್ನಲ್ಲಿ ಸತ್ತು ಹುಟ್ಟುತ್ತಿರ್ಪ ನಿಜಸುಖವಂ ಕೊಟ್ಟು ಸಲಹಾ ಮಹಾಘನ ದೊಡ್ಡದೇಶಿಕಾರ್ಯಗುರುಪ್ರಭುವೆ.
--------------
ಮುಮ್ಮಡಿ ಕಾರ್ಯೇಂದ್ರ /ಮುಮ್ಮಡಿ ಕಾರ್ಯ ಕ್ಷಿತೀಂದ್ರ
ಕನಕಶಿಲೆಯೆನಿಸುವ ಪಾಷಾಣದಲ್ಲಿ ರತಿ ಪುಟ್ಟಲಿಕ್ಕಾಗಿ, ಆ ಮಧ್ಯದಲ್ಲಿ ಸೂತ್ರ ತೋರಲಿಕ್ಕೆ, ಆ ಸೂತ್ರ ಆ ಪಾಷಾಣವ ಗ್ರಹಿಸಿ, ಆವ ಕಡೆ ಮುಖವಾದಲ್ಲಿ ಸೂತ್ರ ಆವರಣಿಸುವಂತೆ, ಶಿವಲಿಂಗಪೂಜೆಯಲ್ಲಿ ಲಿಂಗವ ಮುಟ್ಟುವ ಕೈ, ನಟ್ಟ ದೃಷ್ಟಿ ತನ್ನಂಗದಲ್ಲಿ ಸರ್ವಾಂಗದೋಷಂಗಳ ಮರೆದು ಜಾಗ್ರದಿರವು ಸ್ವಪ್ನದಲ್ಲಿ ತೋರುವಂತೆ ಸ್ವಪ್ನದ ಸಂಗ ಸುಷುಪ್ತಿಯನೆಯಿದಿದಂತೆ ಇಪ್ಪುದು ಶಿವಪೂಜಕನ ಶಿವಮೂರ್ತಿಧ್ಯಾನ. ಈ ಗುಣ ಎನ್ನಯ್ಯಪ್ರಿಯ ಇಮ್ಮಡಿ ನಿಃಕಳಂಕಮಲ್ಲಿಕಾರ್ಜುನ ಲಿಂಗವನರಿವವರಿಗಲ್ಲದೆ ಕಾಣಬಾರದು.
--------------
ಮೋಳಿಗೆ ಮಹಾದೇವಿ
ಮನವೇ, ನಿನ್ನ ನೆನಹು ಸಿದ್ಧಿಯಾದುದಲ್ಲಾ, ಪರಶಿವನೇ ಶ್ರೀಗುರುರೂಪಾಗಿ ನಿನ್ನ ಮನಕ್ಕೆ ಬಂದನು. ಬುದ್ಧಿಯೇ ನಿನ್ನ ಬುದ್ಧಿ ಸುಬುದ್ಧಿಯಾದುದಲ್ಲಾ, ಶ್ರೀಗುರುವೇ ಶಿವ[ಲಿಂಗ]ರೂಪಾಗಿ ನಿನ್ನ ಬುದ್ಧಿಗೆ ಬಂದನು. ಚಿತ್ತವೇ ನೀ ನಿನ್ನ ಚಿತ್ತ ನಿಶ್ಚಿಂತವಾದುದಲ್ಲಾ, ಶಿವಲಿಂಗವೇ ಜಂಗಮರೂಪಾಗಿ ನಿನ್ನ ಚಿತ್ತಕ್ಕೆ ಬಂದನು. ಅಹಂಕಾರವೇ, ನಿನ್ನಹಂಕಾರ ನಿಜವಾದುದಲ್ಲಾ, ಶ್ರೀ ಗುರು ಲಿಂಗ ಜಂಗಮ ತ್ರಿವಿಧವು ಏಕೀಭವಿಸಿ ನಿನಗೆ ಪ್ರಸನ್ನಪ್ರಸಾದವ ಕರುಣಿಸಿದನು. ಆ ಪ್ರಸಾದಲಿಂಗಸ್ವಾಯತವಾಗಿ ನಿಮಗೆ ನಾಲ್ವರಿಗೂ ಪರಿಣಾಮವಾಯಿತ್ತು ಕಾಣಾ. ಪ್ರಾಣವು ನಿನಗೆ ಲಿಂಗಪ್ರಾಣವಾದುದಲ್ಲಾ, ನಮ್ಮೆಲ್ಲರನೂ ಗಬ್ರ್ಥೀಕರಿಸಿಕೊಂಡಿಪ್ಪ ಅಂಗವೇ ಲಿಂಗವಾದುದಲ್ಲಾ. ಪ್ರಾಣವೇ ನಿನ್ನ ಸಂಗದಿಂದ ನಿನ್ನನಾಶ್ರಯಿಸಿಕೊಂಡಿಪ್ಪ ಸರ್ವತತ್ತ್ವಂಗಳೂ ಸರ್ವಪಂಚಾದ್ಥಿಕಾರಿಗಳೂ ಸರ್ವಯೋಗಿಗಳೆಲ್ಲ ಶಿವಪದಂಗಳ ಪಡೆದರಲ್ಲಾ. ಅಹಂಗೆ ಅಹುದು ಕಾಣಾ, ಪ್ರಾಣವೇ ಇದು ದಿಟ, ನೀನೇ ಮಗುಳೆ ಮಹಾಬಂಧುವಾಗಿ ನಿನಗೊಂದು ಏಕಾಂತವ ಹೇಳುವೆನು ಕೇಳು. ನಾನು ನೀನು ಅನೇಕ ಕಲ್ಪಂಗಳಲ್ಲಿಯೂ ಅನೇಕ ಯೋನಿಗಳಲ್ಲಿಯೂ ಜನಿಸಿ ಸ್ಥಿತಿ ಲಯಂಗಳನೂ ಅನುಭವಿಸಿ, ಪಾಪಪುಣ್ಯಂಗಳನುಂಡುದ ಬಲ್ಲೆ. ಅವೆಲ್ಲವನೂ ಕಳೆದುಳಿದು, ಶ್ರೀಗುರುವಿನ ಕರುಣ ಮೇರೆವರಿದು ಮಹಾಪದವಾಯಿತ್ತು. ಶ್ರೀಗುರುವಿನ ಹಸ್ತದಲ್ಲಿ ಜನನವಾಯಿತ್ತು. ಶ್ರೀಗುರುವಿನ ಕರುಣವಾಯಿತ್ತು. ಶಿವಲಿಂಗ ಸ್ವಾಯತವಾಯಿತ್ತು. ಜಂಗಮವೆಂದರಿದು ಜ್ಞಾನವಾಯಿತ್ತು. ಶ್ರೀಗುರು ಲಿಂಗ ಜಂಗಮದಿಂದ ಪ್ರಸಾದವ ಪಡೆದು ಪ್ರಸಾದವನು ಗ್ರಹಿಸಿ ಶಿವಮಹಾಮುಕ್ತಿಪದವಾಯಿತ್ತು. ಇನ್ನೊಂದ ನಾ ನಿಮ್ಮ ಬೇಡಿಕೊಂಬೆನು : ಮಾಯಾಂಗನೆ ಆಸೆ ಮಾಡಿಕೊಂಡು ಬಂದಹಳು, ಅವರಿಬ್ಬರೂ ಹೋಗಲೀಸದಿರಿ, ನಿಮಗೆ ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರನಾಣೆ ಎನಗೆಯೂ ಅದೇ ಆಣೆ.
--------------
ಉರಿಲಿಂಗಪೆದ್ದಿ
ಯಮ, ನಿಯಮ, ಆಸನ, ಪ್ರಾಣಾಯಾಮ, ಪ್ರತ್ಯಾಹಾರ, ಧ್ಯಾನ, ಧಾರಣ, ಸಮಾದ್ಥಿ ಎಂದು ಈಯೆಂಟು ಅಷ್ಟಾಂಗಯೋಗಂಗಳು. ಈ ಯೋಗಂಗಳೊಳಗೆ ಉತ್ತರಭಾಗ, ಪೂರ್ವಭಾಗೆಯೆಂದು ಎರಡು ಪ್ರಕಾರವಾಗಿಹವು. ಯಮಾದಿ ಪಂಚಕವೈದು ಪೂರ್ವಯೋಗ; ಧ್ಯಾನ, ಧಾರಣ, ಸಮಾದ್ಥಿಯೆಂದು ಮೂರು ಉತ್ತರಯೋಗ. ಇವಕ್ಕೆ ವಿವರ: ಇನ್ನು ಯಮಯೋಗ ಅದಕ್ಕೆ ವಿವರ: ಅನೃತ, ಹಿಂಸೆ, ಪರಧನ, ಪರಸ್ತ್ರೀ, ಪರನಿಂದೆ ಇಂತಿವೈದನು ಬಿಟ್ಟು ಲಿಂಗಪೂಜೆಯ ಮಾಡುವುದೀಗ ಯಮಯೋಗ. ಇನ್ನು ನಿಯಮಯೋಗ- ಅದಕ್ಕೆ ವಿವರ: ಬ್ರಹ್ಮಚಾರಿಯಾಗಿ ನಿರಪೇಕ್ಷನಾಗಿ ಆಗಮಧರ್ಮಂಗಳಲ್ಲಿ ನಡೆವವನು. ಶಿವನಿಂದೆಯ ಕೇಳದಿಹನು. ಇಂದ್ರಿಯಂಗಳ ನಿಗ್ರಹವ ಮಾಡುವವನು. ಮಾನಸ, ವಾಚಸ, ಉಪಾಂಶಿಕವೆಂಬ ತ್ರಿಕರಣದಲ್ಲಿ ಪ್ರಣವ ಪಂಚಾಕ್ಷರಿಯ ಸ್ಮರಿಸುತ್ತ ಶುಚಿಯಾಗಿಹನು. ಆಶುಚಿತ್ತವ ಬಿಟ್ಟು ವಿಭೂತಿ ರುದ್ರಾಕ್ಷೆಯ ಧರಿಸಿ ಶಿವಲಿಂಗಾರ್ಚನತತ್ಪರನಾಗಿ ಪಾಪಕ್ಕೆ ಬ್ಥೀತನಾಗಿಹನು. ಇದು ನಿಯಮಯೋಗ. ಇನ್ನು ಆಸನಯೋಗ- ಅದಕ್ಕೆ ವಿವರ: ಸಿದ್ಧಾಸನ, ಪದ್ಮಾಸನ, ಸ್ವಸ್ತಿಕಾಸನ, ಅರ್ಧಚಂದ್ರಾಸನ, ಪರ್ಯಂಕಾಸನ ಈ ಐದು ಆಸನಯೋಗಂಗಳಲ್ಲಿ ಸ್ವಸ್ಥಿರಚಿತ್ತನಾಗಿ ಮೂರ್ತಿಗೊಂಡು ಶಿವಲಿಂಗಾರ್ಚನೆಯ ಮಾಡುವುದೀಗ ಆಸನಯೋಗ. ಇನ್ನು ಪ್ರಾಣಾಯಾಮ- ಅದಕ್ಕೆ ವಿವರ: ಪ್ರಾಣ, ಅಪಾನ, ವ್ಯಾನ, ಉದಾನ, ಸಮಾನ, ನಾಗ, ಕೂರ್ಮ, ಕೃಕರ, ದೇವದತ್ತ, ಧನಂಜಯವೆಂಬ ದಶವಾಯುಗಳು. ಇವಕ್ಕೆ ವಿವರ: ಪ್ರಾಣವಾಯು ಇಂದ್ರ ನೀಲವರ್ಣ. ಹೃದಯಸ್ಥಾನದಲ್ಲಿರ್ದ ಉಂಗುಷ್ಠತೊಡಗಿ ವಾ[ಣಾ]ಗ್ರಪರಿಯಂತರದಲ್ಲಿ ಸತ್ಪ್ರಾಣಿಸಿಕೊಂಡು ಉಚ್ಛಾಸ ನಿಶ್ವಾಸನಂಗೆಯ್ದು ಅನ್ನ ಜೀರ್ಣೀಕರಣವಂ ಮಾಡಿಸುತ್ತಿಹುದು. ಅಪಾನವಾಯು ಹರಿತವರ್ಣ. ಗುಧಸ್ಥಾನದಲ್ಲಿರ್ದು ಮಲಮೂತ್ರಂಗಳ ವಿಸರ್ಜನೆಯಂ ಮಾಡಿಸಿ ಆಧೋದ್ವಾರಮಂ ಬಲಿದು ಅನ್ನರಸ ವ್ಯಾಪ್ತಿಯಂ ಮಾಡಿಸುತ್ತಿಹುದು. ವ್ಯಾನವಾಯು ಗೋಕ್ಷಿರವರ್ಣ. ಸರ್ವಸಂದಿಗಳಲ್ಲಿರ್ದು ನೀಡಿಕೊಂಡಿರ್ದುದನು ಮುದುಡಿಕೊಂಡಿರ್ದುದನು ಅನುಮಾಡಿಸಿ ಅನ್ನಪಾನವ ತುಂಬಿಸುತ್ತಿಹುದು. ಉದಾನವಾಯ ಎಳೆಮಿಂಚಿನವರ್ಣ. ಕಂಠಸ್ಥಾನದಲ್ಲಿರ್ದು ಸೀನುವ, ಕೆಮ್ಮುವ, ಕನಸ ಕಾಣುವ, ಏಳಿಸುವ ಛರ್ದಿ ನಿರೋಧನಂಗಳಂ ಮಾಡಿ ಅನ್ನ ರಸವ ಆಹಾರಸ್ಥಾನಂಗೆಯಿಸುತ್ತಿಹುದು. ಸಮಾನವಾಯು ನೀಲವರ್ಣ. ನಾಬ್ಥಿಸ್ಥಾನದಲ್ಲಿರ್ದು ಅಪಾದಮಸ್ತಕ ಪರಿಯಂತರ ದೇಹಮಂ ಪಸರಿಸಿಕೊಂಡಂಥಾ ಅನ್ನರಸವನು ಎಲ್ಲಾ[ಲೋ] ಮನಾಳಂಗಳಿಗೆ ಹಂಚಿಕ್ಕುವುದು. ಈ ಐದು ಪ್ರಾಣಪಂಚಕ. ಇನ್ನು ನಾಗವಾಯು ಪೀತವರ್ಣ. [ಲೋ] ಮನಾಳಂಗಳಲ್ಲಿರ್ದು ಚಲನೆಯಿಲ್ಲದೆ ಹಾಡಿಸುತ್ತಿಹುದು. ಕೂಮವಾಯುವ ಶ್ವೇತವರ್ಣ. ಉದರ ಲಲಾಟದಲ್ಲಿರ್ದು ಶರೀರಮಂ ತಾಳ್ದು [ದೇಹಮಂ] ಪುಷ್ಟಿಯಂ ಮಾಡಿಕೊಂಡು ಬಾಯ ಮುಚ್ಚುತ್ತ ತೆರೆವುತ್ತ ನೇತ್ರದಲ್ಲಿ ಉನ್ಮೀಲನ ನಿಮೀಲನವಂ ಮಾಡಿಸುತ್ತಿಹುದು. ಕೃಕರವಾಯು ಅಂಜನವರ್ಣ. ನಾಸಿಕಾಗ್ರದಲ್ಲಿರ್ದು ಕ್ಷುಧಾದಿ ಧರ್ಮಂಗಳಂ ನೆಗಳೆ ಗಮನಾಗಮನಂಗಳಂ ಮಾಡಿಸುತ್ತಿಹುದು. ದೇವದತ್ತವಾಯು ಸ್ಫಟಿಕವರ್ಣ. ಗುಹ್ಯ[ಕಟಿ] ಸ್ಥಾನದಲ್ಲಿರ್ದು ಕುಳ್ಳಿರ್ದಲ್ಲಿ ಮಲಗಿಸಿ, ಮಲಗಿರ್ದಲ್ಲಿ ಏಳಿಸಿ ನಿಂದಿರಿಸಿ ಚೇತರಿಸಿ ಒರಲಿಸಿ ಮಾತಾಡಿಸುತ್ತಿಹುದು. ಧನಂಜಯವಾಯು ನೀಲವರ್ಣ. ಬ್ರಹ್ಮರಂಧ್ರದಲ್ಲಿರ್ದು ಕರ್ಣದಲ್ಲಿ ಸಮುದ್ರಘೋಷಮಂ ಘೋಷಿಸಿ ಮರಣಗಾಲಕ್ಕೆ ನಿರ್ಘೋಷಮಪ್ಪುದು. ಈ ಪ್ರಕಾರದಲ್ಲಿ ಮೂಲವಾಯುವೊಂದೇ ಸರ್ವಾಂಗದಲ್ಲಿ ಸರ್ವತೋಮುಖವಾಗಿ ಚರಿಸುತ್ತಿಹುದು. ಆ ಪವನದೊಡನೆ ಪ್ರಾಣ ಕೂಡಿ ಪ್ರಾಣದೊಡನೆ ಪವನ ಕೂಡಿ ಹೃದಯ ಸ್ಥಾನದಲ್ಲಿ ನಿಂದು ಹಂಸನೆನಿಸಿಕೊಂಡು ಆಧಾರ, ಸ್ವಾದ್ಥಿಷ್ಠಾನ, ಮಣಿಪೂರಕ, ಅನಾಹತ, ವಿಶುದ್ಧಿ, ಆಗ್ನೇಯ ಎಂಬ ಷಡುಚಕ್ರದಳಂಗಳಮೇಲೆ ಸುಳಿದು ನವನಾಳಂಗಳೊಳಗೆ ಚರಿಸುತ್ತಿಹುದು. ಅಷ್ಟದಳಂಗಳೇ ಆಶ್ರಯವಾಗಿ ಅಷ್ಟದಳಂಗಳ ಮೆಟ್ಟಿ ಚರಿಸುವ ಹಂಸನು ಅಷ್ಟದಳಂಗಳಿಂದ ವಿಶುದ್ಧಿಚಕ್ರವನೆಯ್ದಿ ಅಲ್ಲಿಂದ ನಾಸಿಕಾಗ್ರದಲ್ಲಿ ಹದಿನಾರಂಗುಲ ಪ್ರಮಾಣ ಹೊರಸೂಸುತ್ತಿಹುದು; ಹನ್ನೆರಡಂಗುಲ ಪ್ರಮಾಣ ಒಳಗೆ ತುಂಬುತ್ತಿಹುದು. ಹೀಂಗೆ ರೇಚಕ ಪೂರಕದಿಂದ ಮರುತ ಚರಿಸುತ್ತಿರಲು ಸಮಸ್ತ್ರ ಪ್ರಾಣಿಗಳ ಆಯುಷ್ಯವು ದಿನ ದಿನಕ್ಕೆ ಕುಂದುತ್ತಿಹುದು. ಹೀಂಗೆ ಈಡಾ ಪಿಂಗಳದಲ್ಲಿ ಚರಿಸುವ ರೇಚಕ ಪೂರಕಂಗಳ ಭೇದವನರಿದು ಮನ ಪವನಂಗಳ ಮೇಲೆ ಲಿಂಗವ ಸಂಬಂದ್ಥಿಸಿ ಮನ ಪವನ ಪ್ರಾಣಂಗಳ ಲಿಂಗದೊಡನೆ ಕೂಡಿ ಲಿಂಗ ಸ್ವರೂಪವ ಮಾಡಿ ವಾಯು ಪ್ರಾಣತ್ವವ ಕಳೆದು ಲಿಂಗ ಪ್ರಾಣಿಯ ಮಾಡಿ ಹೃದಯ ಕಮಲ ಮಧ್ಯದಲ್ಲಿ ಪ್ರಣವವನುಚ್ಚರಿಸುತ್ತ ಪರಶಿವ ಧ್ಯಾನದಲ್ಲಿ ತರಹರವಾಗಿಪ್ಪುದೀಗ ಪ್ರಾಣಾಯಾಮ. ಇನ್ನು ಪ್ರತ್ಯಾಹಾರಯೋಗ-ಅದಕ್ಕೆ ವಿವರ: ಆಹಾರದಿಂ ನಿದ್ರೆ, ನಿದ್ರೆಯಿಂ ಇಂದ್ರಿಯಂಗಳು, ಇಂದ್ರಿಯಂಗಳಿಂದ ವಿಷಯಂಗಳು ಘನವಾಗುತ್ತಿಹುವು ನೋಡಾ. ಆ ವಿಷಯದಿಂದ ದುಃಕರ್ಮಗಳ ಮಿಗೆ ಮಾಡಿ ಜೀವಂಗೆ ಭವ ಭವದ ಬಂಧನವನೊಡಗೂಡಿ ಆಯಸಂ ಬಡುತ್ತಿಪ್ಪರಜ್ಞ್ಞಾನ ಕರ್ಮಿಗಳು; ಈ ಅವಸ್ಥೆಯ ಹೊಗದಿಹರು ಸುಜ್ಞಾನಿ ಧರ್ಮಿಗಳು. ಅದರಿಂದಲಾಹಾರಮಂ ಕ್ರಮ ಕ್ರಮದಿಂದ ಉದರಕ್ಕೆ ಹವಣಿಸುತ್ತ ಬಹುದು. ಗುರು ಕೃಪೆಯಿಂದ ಈ ಪ್ರಕಾರದಲ್ಲಿ ಸರ್ವೇಂದ್ರಿಯಂಗಳನು ಲಿಂಗಮುಖದಿಂದ ಸಾವಧಾನವ ಮಾಡಿಕೊಂಡಿಪ್ಪುದೀಗ ಪ್ರತ್ಯಾಹಾರಯೋಗ. ಈ ಐದು ಪೂರ್ವಯೋಗಂಗಳು. ಇನ್ನು ಧ್ಯಾನ, ಧಾರಣ, ಸಮಾದ್ಥಿಯೆಂದು ಮೂರು ಉತ್ತರಯೋಗಂಗಳು. ಇನ್ನು ಧ್ಯಾನಯೋಗ- ಅದಕ್ಕೆ ವಿವರ: ಅಂತರಂಗದ ಶುದ್ಧ ಪರಮಾತ್ಮ ಲಿಂಗವನೇ ಶಿವಲಿಂಗ ಸ್ವರೂಪವ ಮಾಡಿ ಕರಸ್ಥಲಕ್ಕೆ ಶ್ರೀಗುರು ತಂದು ಕೊಟ್ಟನಾಗಿ ಆ ಕರಸ್ಥಲದಲ್ಲಿದ್ದ ಶಿವಲಿಂಗವೇ ಪರಮಾರ್ಥಚಿಹ್ನವೆಂದರಿದು ಆ ಲಿಂಗವನೇ ಆಧಾರ, ಸ್ವಾದ್ಥಿಷ್ಠಾನ, ಮಣಿಪೂರಕ, ಅನಾಹತ, ವಿಶುದ್ಧಿ, ಆಜ್ಞೇಯ, ಬ್ರಹ್ಮರಂಧ್ರ ಮುಖ್ಯವಾದ ಸ್ಥಾನಂಗಳಲ್ಲಿ ಆ ಶಿವಲಿಂಗಮೂರ್ತಿಯನೆ ಆಹ್ವಾನ ವಿಸರ್ಜನೆಯಿಲ್ಲದೆ ಧ್ಯಾನಿಪುದೀಗ ಧ್ಯಾನಯೋಗ. ಆ ಲಿಂಗವ ಭಾವ, ಮನ, ಕರಣ ಮುಖ್ಯವಾದ ಸರ್ವಾಂಗದಲ್ಲಿ ಧರಿಸುವುದೀಗ ಧಾರಣಯೋಗ. ಆ ಸತ್ಕಿ ್ರಯಾ ಜ್ಞಾನಯೋಗದಿಂದ ಪ್ರಾಣಂಗೆ ಶಿವಕಳೆಯ ಸಂಬಂದ್ಥಿಸಿ ಇಷ್ಟ, ಪ್ರಾಣ, ಭಾವವೆಂಬ ಲಿಂಗತ್ರಯವನು ಏಕಾಕಾರವ ಮಾಡಿ ಅಖಂಡ ಪರಿಪೂರ್ಣ ಕೇವಲ ಪರಂಜ್ಯೋತಿ ಸ್ವರೂಪವಪ್ಪ ಮಹಾಲಿಂಗದೊಳಗೆ ಸಂಯೋಗವಾಗಿ ಬ್ಥಿನ್ನವಿಲ್ಲದೆ ಏಕಾರ್ಥವಾಗಿಹುದೀಗ ಸಮಾದ್ಥಿಯೋಗ. ಇಂತೀ ಅಷ್ಟಾಂಗಯೋಗದಲ್ಲಿ ಶಿವಲಿಂಗಾರ್ಚನೆಯ ಮಾಡಿ ಶಿವತತ್ವದೊಡನೆ ಕೂಡುವುದೀಗ ಲಿಂಗಾಂಗಯೋಗ. ಇನ್ನು ಕರ್ಮಕಾಂಡಿಗಳು ಮಾಡುವ ಕರ್ಮಯೋಗಂಗಳು- ಅವಾವವೆಂದಡೆ: ಯಮ, ನಿಯಮ, ಆಸನ, ಪ್ರಾಣಾಯಾಮ, ಪ್ರತ್ಯಾಹಾರವೆಂಬ ಈ ಐದನು ಲಿಂಗವಿರಹಿತವಾಗಿ ಮಾಡುತ್ತಿಪ್ಪರಾಗಿ ಈ ಐದು ಕರ್ಮಯೋಗಂಗಳು. ಅವರು ಲಕ್ಷಿಸುವಂಥಾ ವಸ್ತುಗಳು ಉತ್ತರಯೋಗವಾಗಿ ಮೂರು ತೆರ. ಅವಾವವೆಂದಡೆ: ನಾದಲಕ್ಷ ್ಯ, ಬಿಂದುಲಕ್ಷ ್ಯ, ಕಲಾಲಕ್ಷ ್ಯವೆಂದು ಮೂರು ತೆರ. ನಾದವೇ ಸಾಕ್ಷಾತ್ ಪರತತ್ವವೆಂದೇ ಲಕ್ಷಿಸುವರು. ಬಿಂದುವೇ ಆಕಾರ, ಉಕಾರ, ಮಕಾರ, ಈ ಮೂರು ಶುದ್ಧಬಿಂದು ಸಂಬಂಧವೆಂದೂ. ಆ ಶುದ್ಧ ಬಿಂದುವೇ ಕೇವಲ ದಿವ್ಯ ಪ್ರಕಾಶವನುಳ್ಳದೆಂದೂ ಲಕ್ಷಿಸುವರು. ಕಲೆಯೇ ಚಂದ್ರನ ಕಲೆಯ ಹಾಂಗೆ, ಸೂರ್ಯನ ಕಿರಣಂಗಳ ಹಾಂಗೆ, ಮಿಂಚುಗಳ ಪ್ರಕಾಶದ ಹಾಂಗೆ, ಮುತ್ತು, ಮಾಣಿಕ್ಯ, ನವರತ್ನದ ದೀಪ್ತಿಗಳ ಹಾಂಗೆ, ಪ್ರಕಾಶಮಾಯವಾಗಿಹುದೆಂದು ಲಕ್ಷಿಸುವುದೀಗ ಕಲಾಲಕ್ಷ ್ಯ. ಈ ಎಂಟು ಇತರ ಮತದವರು ಮಾಡುವ ಯೋಗಂಗಳು. ಇವ ಲಿಂಗವಿರಹಿತವಾಗಿ ಮಾಡುವರಾಗಿ ಕರ್ಮಯೋಗಂಗಳು. ಈ ಕರ್ಮಕೌಶಲ್ಯದಲ್ಲಿ ಲಿಂಗವಿಲ್ಲ ನೋಡಾ. ಅದುಕಾರಣ ಇವ ಮುಟ್ಟಲಾಗದು. ಇನ್ನು ವೀರಮಾಹೇಶ್ವರರುಗಳ ಲಿಂಗಸಂಧಾನವೆಂತೆಂದರೆ: ಬ್ರಹ್ಮರಂಧ್ರದಲ್ಲಿಪ್ಪ ನಾದ ಚೈತನ್ಯವಪ್ಪ ಪರಮ ಚಿತ್ಕಲೆಯನೇ ಭಾವ, ಮನ, ಕರದಲ್ಲಿ ಶ್ರೀಗುರು ತಂದು ಸಾಹಿತ್ಯವ ಮಾಡಿದನಾಗಿ ಭಾವದಲ್ಲಿ ಸತ್ತ್ವರೂಪವಪ್ಪ ಭಾವಲಿಂಗವೆನಿಸಿ, ಪ್ರಾಣದಲ್ಲಿ ಚಿತ್ ಸ್ವರೂಪವಪ್ಪ ಪ್ರಾಣಲಿಂಗವೆನಿಸಿ, ಕರಸ್ಥಲದಲ್ಲಿ ಆನಂದ ಸ್ವರೂಪವಪ್ಪ ಇಷ್ಟಲಿಂಗವೆನಿಸಿ, ಒಂದೇ ವಸ್ತು ತನು, ಮನ, ಭಾವಂಗಳಲ್ಲಿ ಇಷ್ಟ, ಪ್ರಾಣ, ಭಾವವಾದ ಭೇದವನರಿದು ಇಷ್ಟಲಿಂಗವ ದೃಷ್ಟಿಯಿಂದ ಗ್ರಹಿಸಿ ಪ್ರಾಣಲಿಂಗವ ಮನಜ್ಞಾನದಿಂದ ಗ್ರಹಿಸಿ ತೃಪ್ತಿಲಿಂಗವ ಭಾವಜ್ಞಾನದಿಂದ ಗ್ರಹಿಸಿ ಈ ಲಿಂಗತ್ರಯವಿಡಿದಾಚರಿಸಿ ಲಿಂಗದೊಡನೆ ಕೂಡಿ ಲಿಂಗವೇ ತಾನು ತಾನಾಗಿ ವಿರಾಜಿಸುತ್ತಿಪ್ಪುದೀಗ ಶಿವಯೋಗ ನೋಡಾ, ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.
--------------
ತೋಂಟದ ಸಿದ್ಧಲಿಂಗ ಶಿವಯೋಗಿಗಳು
ಕಲ್ಲು ಲಿಂಗವಲ್ಲ, ಉಳಿಯ ಮೊನೆಯಲ್ಲಿ ಒಡೆಯಿತ್ತು. ಮರ ದೇವರಲ್ಲ, ಉರಿಯಲ್ಲಿ ಬೆಂದಿತ್ತು. ಮಣ್ಣು ದೇವರಲ್ಲ, ನೀರಿನ ಕೊನೆಯಲ್ಲಿ ಕದಡಿತ್ತು. ಇಂತಿವನೆಲ್ಲವನರಿವ ಚಿತ್ತ ದೇವರಲ್ಲ. ಕರಣಂಗಳ ಮೊತ್ತದೊಳಗಾಗಿ ಸತ್ವಗೆಟ್ಟಿತ್ತು. ಇಂತಿವ ಕಳೆದುಳಿದ ವಸ್ತುವಿಪ್ಪೆಡೆ ಯಾವುದೆಂದಡೆ : ಕಂಡವರೊಳಗೆ ಕೈಕೊಂಡಾಡದೆ, ಕೊಂಡ ವ್ರತದಲ್ಲಿ ಮತ್ತೊಂದನೊಡಗೂಡಿ ಬೆರೆಯದೆ, ವಿಶ್ವಾಸ ಗ್ರಹಿಸಿ ನಿಂದಲ್ಲಿ ಆ ನಿಜಲಿಂಗವಲ್ಲದೆ, ಮತ್ತೊಂದು ಪೆರತನರಿಯದೆ ನಿಂದಾತನೆ ಸರ್ವಾಂಗಲಿಂಗಿ, ವೀರಬೀರೇಶ್ವರಲಿಂಗದೊಳಗಾದ ಶರಣ.
--------------
ವೀರ ಗೊಲ್ಲಾಳ/ಕಾಟಕೋಟ
ಎನ್ನ ಘ್ರಾಣ ಸಮರಸವಾಯಿತ್ತಯ್ಯಾ ನಿಮ್ಮ ಗಂಧಪ್ರಸಾದವ ಗ್ರಹಿಸಿ ನಿಮ್ಮೊಳಗೆ. ಎನ್ನ ಜಿಹ್ವೆ ಸಮರಸವಾಯಿತ್ತಯ್ಯಾ ನಿಮ್ಮ ರುಚಿಪ್ರಸಾದವ ಗ್ರಹಿಸಿ ನಿಮ್ಮೊಳಗೆ. ಎನ್ನ ನೇತ್ರ ಸಮರಸವಾಯಿತ್ತಯ್ಯಾ ನಿಮ್ಮ ರೂಪುಪ್ರಸಾದವ ಗ್ರಹಿಸಿ ನಿಮ್ಮೊಳಗೆ. ಎನ್ನ ತ್ವಕ್ಕು ಸಮರಸವಾಯಿತ್ತಯ್ಯಾ ನಿಮ್ಮ ಸ್ಪರ್ಶನಪ್ರಸಾದವ ಗ್ರಹಿಸಿ ನಿಮ್ಮೊಳಗೆ. ಎನ್ನ ಶ್ರೋತ್ರ ಸಮರಸವಾಯಿತ್ತಯ್ಯಾ ನಿಮ್ಮ ಶಬ್ದಪ್ರಸಾದವ ಗ್ರಹಿಸಿ ನಿಮ್ಮೊಳಗೆ. ಎನ್ನ ಹೃದಯ ಸಮರಸವಾಯಿತ್ತಯ್ಯಾ ನಿಮ್ಮ ತೃಪ್ತಿಪ್ರಸಾದವ ಗ್ರಹಿಸಿ ನಿಮ್ಮೊಳಗೆ. ಎನ್ನ ಸರ್ವಾಂಗ ಸಮರಸವಾಯಿತ್ತಯ್ಯಾ ನಿಮ್ಮ ಮಹಾಪ್ರಸಾದವ ಗ್ರಹಿಸಿ ನಿಮ್ಮೊಳಗೆ ಅಖಂಡೇಶ್ವರಾ.
--------------
ಷಣ್ಮುಖಸ್ವಾಮಿ
ಚೌಪೀಠದ ಮಂಟಪದಲ್ಲಿ ಗುರು ಕುಳ್ಳಿರ್ದು, ದ್ವಿದಳಮಂಟಪದಲ್ಲಿರ್ದ ಶಿಷ್ಯಂಗೆ, ತ್ರಿಕೂಟಸ್ಥಾನದ ಲಿಂಗವನುಪದೇಶಿಸಿ ತೋರಿ, ಗುರುಲಿಂಗದೊಳಗಾದನು. ಇದು ಕರಚೋದ್ಯ ನೋಡಾ. ಶಿಷ್ಯ ಲಿಂಗವ ಗ್ರಹಿಸಿ ಲಿಂಗವಾದ ಪರಿಯನು ಇತರರ್ಗರಿಯಬಹುದೇ?, ಜ್ಞಾನೋಪದೇಶದ ಬಗೆಯನು, ನಿಜಗುರು ಸಿದ್ಧಲಿಂಗೇಶ್ವರ ನಿಮ್ಮ ಶರಣ ಬಲ್ಲನು.
--------------
ಸ್ವತಂತ್ರ ಸಿದ್ಧಲಿಂಗ
ಲಿಂಗಪೂಜಕರಿಗೆ ಭವವುಂಟೆಂದು ಹೇಳುತ್ತಿದ್ದೇನೆ. ಬ್ರಹ್ಮ ವಿಷ್ಣಾ ್ವದಿಗಳು ಲಿಂಗಾರ್ಚನೆಯ ಮಾಡಿ ಭವಕ್ಕೆ ಬಂದುದನರಿಯಾ. ಬಸವಣ್ಣ ಮೊದಲಾದ ಪುರಾತರೆಲ್ಲ ಪ್ರಸಾದಲಿಂಗ ಗ್ರಹಿಸಿ ಸಂದಿಲ್ಲದ ಕೂಟವ ಮಾಡಿದ ಗುರು ಕಪಿಲಸಿದ್ಧಮಲ್ಲಿಕಾರ್ಜುನಯ್ಯಾ.
--------------
ಸಿದ್ಧರಾಮೇಶ್ವರ
ಲಿಂಗವು ಸರ್ವಾಂಗದಲ್ಲಿ ಭರಿತವಾಗಿರಲು ಮನ ಅರಿಯದು, ತನು ಸೋಂಕದು, ಜ್ಞಾನ ಕಾಣಿಸದು, ಭಾವ ಮುಟ್ಟದು. ಶಿವಶಿವಾ ವಿಶ್ವಾಸದಿಂ ಗ್ರಹಿಸಿ ಹಿಡಿಯದೆ ಕೆಟ್ಟೆ. ಅಂತರಂಗ ಬಹಿರಂಗ ಭರಿತವಾಗಿ ಲಿಂಗವಿದಾನೆ ಇದಾನೆ. ಮನವೇ, ನಿಮಿಷದಲಿ ವಿಶ್ವಾಸದಿಂ ಗ್ರಹಿಸಿದಡೆ ಸತ್ಯನಪ್ಪೆ ನಿತ್ಯನಪ್ಪೆ ಮುಕ್ತನಪ್ಪೆ ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರ.
--------------
ಉರಿಲಿಂಗಪೆದ್ದಿ
ಲಿಂಗಘ್ರಾಣದಲ್ಲಿ ಲಿಂಗಕ್ಕೆ ಲಿಂಗಗಂಧವನರ್ಪಿಸಿ, ಲಿಂಗಪ್ರಸಾದವ ಗ್ರಹಿಸುತಿರ್ಪನಯ್ಯಾ ನಿಮ್ಮ ಪ್ರಸಾದಿ. ಲಿಂಗಜಿಹ್ವೆಯಲ್ಲಿ ಲಿಂಗಕ್ಕೆ ಲಿಂಗರುಚಿಯನರ್ಪಿಸಿ ಲಿಂಗಪ್ರಸಾದವ ಗ್ರಹಿಸುತಿರ್ಪನಯ್ಯಾ ನಿಮ್ಮ ಪ್ರಸಾದಿ. ಲಿಂಗನೇತ್ರದಲ್ಲಿ ಲಿಂಗಕ್ಕೆ ಲಿಂಗರೂಪನರ್ಪಿಸಿ ಲಿಂಗಪ್ರಸಾದವ ಗ್ರಹಿಸುತಿರ್ಪನಯ್ಯಾ ನಿಮ್ಮ ಪ್ರಸಾದಿ. ಲಿಂಗತ್ವಕ್ಕಿನಲ್ಲಿ ಲಿಂಗಕ್ಕೆ ಲಿಂಗಸ್ಪರ್ಶವನರ್ಪಿಸಿ ಲಿಂಗಪ್ರಸಾದವ ಗ್ರಹಿಸುತಿರ್ಪನಯ್ಯಾ ನಿಮ್ಮ ಪ್ರಸಾದಿ. ಲಿಂಗಶ್ರೋತ್ರದಲ್ಲಿ ಲಿಂಗಕ್ಕೆ ಲಿಂಗಶಬ್ದವನರ್ಪಿಸಿ ಲಿಂಗಪ್ರಸಾದವ ಗ್ರಹಿಸುತಿರ್ಪನಯ್ಯಾ ನಿಮ್ಮ ಪ್ರಸಾದಿ. ಲಿಂಗಹೃದಯದಲ್ಲಿ ಲಿಂಗಕ್ಕೆ ಲಿಂಗತೃಪ್ತಿಯನರ್ಪಿಸಿ ಲಿಂಗಪ್ರಸಾದವ ಗ್ರಹಿಸುತಿರ್ಪನಯ್ಯಾ ನಿಮ್ಮ ಪ್ರಸಾದಿ. ಇಂತೀ ಒಳಹೊರಗೆ ತೆರಹಿಲ್ಲದೆ ಲಿಂಗಕ್ಕೆ ಲಿಂಗವನರ್ಪಿಸಿ, ಲಿಂಗಪ್ರಸಾದವ ಗ್ರಹಿಸಿ, ಘನಲಿಂಗವಾಗಿರ್ಪ ಮಹಾಪ್ರಸಾದಿಗಳ ಶ್ರೀಚರಣಕ್ಕೆ ನಮೋ ನಮೋ ಎಂಬೆನಯ್ಯಾ ಅಖಂಡೇಶ್ವರಾ.
--------------
ಷಣ್ಮುಖಸ್ವಾಮಿ
ಪ್ರಾಣಲಿಂಗಸಂಬಂಧಿಯಾದ ಸದ್ಭಕ್ತನು ಏಕಭಕ್ತೋಪವಾಸಂ ಮಾಡಲಾಗದು. ಅದೆಂತೆಂದಡೆ: ದೇವರಾರೋಗಣೆ ತಪ್ಪುವುದು, ಅಷ್ಟವಿಧಾರ್ಚನೆ ಷೋಡಶೋಪಚಾರ ಶ್ರೀ ತಪ್ಪುವುದು, ಶ್ರೀಗುರುವಾಜ್ಞೆ ತಪ್ಪುವುದು. ದೋಷಕಾರಿಯಪ್ಪನು ಕೇಳಿರಣ್ಣಾ. ಪ್ರಾಣಲಿಂಗಸಮಾಯುಕ್ತಾ ಏಕಭುಕ್ತೋಪವಾಸಿನಃ ಪ್ರಸಾದೋ ನಿಷ್ಫಲಶ್ಚೈವ ರೌರವಂ ನರಕಂ ಭವೇತ್ ಎಂದುದಾಗಿ, ಇದು ಕಾರಣ, ನಿತ್ಯನೈಮಿತ್ತಿಕ ಪಂಚಪರ್ವ ವಿಶೇಷತಿಥಿಗಳಲ್ಲಿ ಆವ ದಿನದಲ್ಲಿಯೂ ಒಂದೆ ಎಂದು ಅಷ್ಟವಿಧಾರ್ಚನೆ ಷೋಡಶೋಪಚಾರವೆ ಕರ್ತವ್ಯವೆಂದು ದೇವರಾರೋಗಣೆಯ ಮಾಡಿಸಿ, ಪ್ರಸನ್ನತ್ವವ ಪಡೆದು ಪ್ರಸಾದವ ಗ್ರಹಿಸಿ ಮುಕ್ತರಪ್ಪುದು ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರ.
--------------
ಉರಿಲಿಂಗಪೆದ್ದಿ
ಪೃಥ್ವಿಯೇ ಸ್ಥಾವರ, ಜಲವೇ ಜಂಗಮ, ಅಗ್ನಿಯೇ ಸ್ಥಾವರ, ವಾಯುವೇ ಜಂಗಮ. ಆಕಾಶವೇ ಸ್ಥಾವರ, ಜೀವನೇ ಜಂಗಮ. ಪೃಥ್ವಿಯೇ ಸ್ಥೂಲ, ಜಲವೇ ಸೂಕ್ಷ್ಮ. ಅಗ್ನಿಯೇ ಸ್ಥೂಲ, ವಾಯುವೇ ಸೂಕ್ಷ್ಮ ಆಕಾಶವೇ ಸ್ಥೂಲ, ಆತ್ಮನೇ ಸೂಕ್ಷ್ಮ. ಸ್ಥೂಲವಸ್ತುಗಳಿಂದ ಸೂಕ್ಷ್ಮ ವಸ್ತುಗಳೇ ಪ್ರಾಣಮಾಗಿಹವು. ತತ್ಸಂಗಂಗಳಿಂ ಬಿಂದುಕಳಾನಾದಗಳು ಸೃಷ್ಟಿಯಾಗುತ್ತಿಹವು. ಸ್ಥೂಲವಸ್ತುಗಳು ಆ ಸೂಕ್ಷ್ಮವಸ್ತುಗಳಲ್ಲೇ ಸೃಷ್ಟಿ ಸ್ಥಿತಿ ಸಂಹಾರಂಗಳಂ ಹೊಂದುತ್ತಿಹವು. ಪೃಥಿವ್ಯಾದಿ ಪಂಚಭೂತಂಗಳೇ ಘ್ರಾಣಾದಿ ಪಂಚೇಂದ್ರಿಯಂಗಳಾಗಿ, ಆಯಾ ಗುಣಂಗಳಂ ಗ್ರಹಿಸುವಂತೆ ಆತ್ಮನಿಗೆ ಮನಸ್ಸೇ ಇಂದ್ರಿಯಮಾಗಿ, ಆತ್ಮನ ಗುಣವಂ ತಾನೇ ಗ್ರಹಿಸುತ್ತಿರ್ಪುದು. ಪರಮಾತ್ಮನಿಗೆ ಭಾವೇಂದ್ರಿಯಮಾಗಿ, ಆ ಪರಮನ ಗುಣವಂ ತಾನೇ ಗ್ರಹಿಸುತ್ತಿರ್ಪುದು. ಮುಖಂಗಳಾವುವೆಂದೊಡೆ: ಘ್ರಾಣಕ್ಕೇ ವಾಯುವೇ ಮುಖ, ಜಿಹ್ವೆಗೆ ಅಗ್ನಿಯೇ ಮುಖ, ನೇತ್ರಕ್ಕೆ ಜಲವೇ ಮುಖ, ತ್ವಕ್ಕಿಗೆ ಪೃಥ್ವಿಯೇ ಮುಖ, ಶ್ರೋತ್ರಕ್ಕಾತ್ಮವೇ ಮುಖ, ಮನಸ್ಸಿಗೆ ಚಿದಾಕಾಶವೆ ಮುಖ, ಭಾವಕ್ಕೆ ನಿಜವೇ ಮುಖವಾದಲ್ಲಿ. ಪಂಚೇದ್ರಿಯಂಗಳು ಪಂಚಭೂತಗುಣಂಗಳಂ ಗ್ರಹಿಸುವಂತೆ, ಮನಸ್ಸು ಆತ್ಮಗುಣವನ್ನು ಜ್ಞಾನಮುಖದಿಂ ಗ್ರಹಿಸಿ, ಗುರುದತ್ತಲಿಂಗವೂ ಆತ್ಮನೂ ಏಕಮೆಂದು ತಿಳಿದು, ತೂರ್ಯಭಾವದಲ್ಲಿ ಸ್ವಭಾವಮಾಗಿ, ನಿಜಾನಂದ ತೂರ್ಯಾತೀತದಲ್ಲಿ ಎರಕವೆರದಿರ್ಪುದೇ ಲಿಂಗೈಕ್ಯ ಕಾಣಾ ಮಹಾಘನ ದೊಡ್ಡದೇಶಿಕಾರ್ಯಗುರುಪ್ರಭುವೆ.
--------------
ಮುಮ್ಮಡಿ ಕಾರ್ಯೇಂದ್ರ /ಮುಮ್ಮಡಿ ಕಾರ್ಯ ಕ್ಷಿತೀಂದ್ರ
ಅಯ್ಯಾ ಘ್ರಾಣದಲ್ಲಿ ನಿಂದು ಗಂಧವ ಗ್ರಹಿಸಿ ಗಂಧಪ್ರಸಾದವನೀವುತ್ತಿರ್ಪಿರಯ್ಯ. ಜಿಹ್ವೆಯಲ್ಲಿ ನಿಂದು ರಸವ ಗ್ರಹಿಸಿ ರಸಪ್ರಸಾದವನೀವುತ್ತಿರ್ಪಿರಯ್ಯ. ನೇತ್ರದಲ್ಲಿ ನಿಂದು ರೂಪದ ಗ್ರಹಿಸಿ ರೂಪಪ್ರಸಾದವ ನೀವುತ್ತಿರ್ಪಿರಯ್ಯ. ತ್ವಕ್ಕಿನಲ್ಲಿ ನಿಂದು ಸ್ವರ್ಶನವ ಗ್ರಹಿಸಿ ಸ್ಪರ್ಶನಪ್ರಸಾದವನೀವುತ್ತಿರ್ಪಿರಯ್ಯ. ಶ್ರೋತ್ರದಲ್ಲಿ ನಿಂದು ಶಬ್ದವ ಗ್ರಹಿಸಿ ಶಬ್ದಪ್ರಸಾದವನೀವುತ್ತಿರ್ಪಿರಯ್ಯ. ಮನದಲ್ಲಿ ನಿಂದು ಪರಿಣಾಮವ ಗ್ರಹಿಸಿ ಪರಿಣಾಮಪ್ರಸಾದವ ನೀವುತ್ತಿರ್ಪಿರಯ್ಯ. ಇಂತು ಸರ್ವೇಂದ್ರಿಯಂಗಳಲ್ಲಿ ನಿಂದು, ಸರ್ವಪದಾರ್ಥವ ಗ್ರಹಿಸಿ ಎನಗೆ ಪ್ರಸಾದವ ಕರುಣಿಸುತ್ತಿರ್ಪಿರಯ್ಯಾ, ನಿಜಗುರು ಸ್ವತಂತ್ರಸಿದ್ಧಲಿಂಗೇಶ್ವರಾ.
--------------
ಸ್ವತಂತ್ರ ಸಿದ್ಧಲಿಂಗ
'ಷಟುಸ್ಥಲದ ಬ್ರಹ್ಮಿಗಳೆ'ಂದು ಹೇಳಿಕೊಂಬಿರಿ, ನೀವು ಕೇಳಿರಯ್ಯಾ : ನಿಮ್ಮ ಷಟುಸ್ಥಲದ ಬ್ರಹ್ಮಿಗಳ ಲಕ್ಷಣ ದಾವುದೆಂದಡೆ, ಅಂಗಲಿಂಗ ಸಂಬಂಧವಾದುದೇ ಷಟುಸ್ಥಲ. ಅಂಗ ಲಿಂಗವಾದ ಪರಿ ಎಂತೆಂದಡೆ, ಲಿಂಗ ಪೋದುದೇ ಷಟುಸ್ಥಲ: ಗ್ರಂಥ || ಅನಾದಿ ಸಂಸಿದ್ಧಸ್ಯ ಆತ್ಮಪರೀಕ್ಷಣಂ ಜಗತಾರಾ[ಧ್ಯಸ್ಯ] | ಸತ್ಯಂ ಜನನಮರಣವಿರಹಿತಂ [ಇತಿ]ಷಟ್‍ಸ್ಥಲಂ || ಇಂತೀ ಸಾಕ್ಷಿ ಉಂಟಾಗಿ, ಪರಾನ್ನ ಅಪೇಕ್ಷಿತನಾಗದೆ, ಪರಸ್ತ್ರೀಯಂ ನೋಡದೆ, ಪರರೊಡವೆಯ ಹಂಗು ಹಚ್ಚದೆ, ಪರಾತ್ಪರವಾಗಿಪ್ಪುದೆ ಜಂಗಮ ಲಿಂಗ. ಪರಮ ಹರುಷದಿಂದ ಪಾತಕವನೀಡಾಡಿ, ಪರ[ಮ] ಪುರುಷಾರ್ಥವನೇ ಗ್ರಹಿಸಿ, ಪಾವನಚರಿತನಾಗಿ, ಭಕ್ತನ ಮನೆಗೆ ನಡೆದು ಬಂದು ಬೀಯೆಂಬೋ ಪಾಪವು ಕ್ಷಯವಾಗಲೆಂದು 'ಭಿಕ್ಷಾ' ಎಂದು ನಿಂದಡೆ, ಅರಿದ ಭಕ್ತ ನೀಡಿದರೂ ಸಂತೋಷ ಅರಿಯದಿದ್ದ ಭಕ್ತ ನೀಡದಿದ್ದರೂ ಸಂತುಷ್ಟನಾಗಿ 'ಹಳ್ಳಿಗೇಕರಾತ್ರಿ ಪಟ್ಟಣಕ್ಕೆ ಪಂಚರಾತ್ರಿ' ಸಂಚರಿಸುತಿರ್ಪುದೇ ಷಟುಸ್ಥಲದ ಬ್ರಹ್ಮಿ ಎಂದು ನಮೋ ಎಂಬುವೆನಯ್ಯಾ ಬರಿದೆ 'ನಾ ಷಟುಸ್ಥಲದ ಬ್ರಹ್ಮಿ' 'ನೀ ಷಟುಸ್ಥಲದ ಬ್ರಹ್ಮಿ' ಎಂದು ತಿರುಗುವ ಮೂಳ ಹೊಲೆಯರ ಮುಖವ ನೋಡಲಾಗದು ಕಾಣೋ ಕೂಡಲಾದಿ ಚನ್ನಸಂಗಮದೇವಾ.
--------------
ಕೂಡಲಸಂಗಮೇಶ್ವರ
ಇನ್ನಷ್ಟು ... -->