ಅಥವಾ

ಒಟ್ಟು 51 ಕಡೆಗಳಲ್ಲಿ , 22 ವಚನಕಾರರು , 47 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಅಷ್ಟದಳಕಮಲವ ಮೆಟ್ಟಿ ಚರಿಸುವ ಹಂಸನ ಭೇದವ ಹೇಳಿಹೆನು: ಪೂರ್ವದಳಕೇರಲು ಗುಣಿಯಾಗಿಹನು. ಅಗ್ನಿದಳಕೇರಲು ಕ್ಷುಧೆಯಾಗಿಹನು. ದಕ್ಷಿಣದಳಕೇರಲು ಕ್ರೋದ್ಥಿಯಾಗಿಹನು. ನೈಋತ್ಯದಳಕೇರಲು ಅಸತ್ಯನಾಗಿಹನು. ವರುಣದಳಕೇರಲು ನಿದ್ರೆಗೆಯ್ವುತಿಹನು. ವಾಯುದಳಕೇರಲು ಸಂಚಲನಾಗಿಹನು. ಉತ್ತರದಳಕೇರಲು ಧರ್ಮಿಯಾಗಿಹನು. ಈಶಾನ್ಯದಳಕೇರಲು ಕಾಮಾತುರನಾಗಿಹನು. ಈ ಅಷ್ಟದಳಮಂಟಪದ ಮೇಲೆ ಹರಿದಾಡುವ ಹಂಸನ ಕುಳನ ತೊಲಗಿಸುವ ಕ್ರಮವೆಂತುಟಯ್ಯಾಯೆಂದೊಡೆ: ಅಷ್ಟದಳಮಂಟಪದ ಅಷ್ಟಕೋಣೆಗಳೊಳಗೆ ಅಷ್ಟ ಲಿಂಗಕಳೆಯ ಪ್ರತಿಷ್ಠಿಸಿ ಹಂಸನ ನಟ್ಟ ನಡುಮಧ್ಯದಲ್ಲಿ ತಂದು ನಿಲಿಸಲು ಮುಕ್ತಿಮೋಕ್ಷವನೆಯ್ದಿ ಪರವಶನಾಗಿಪ್ಪನಯ್ಯಾ, ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.
--------------
ತೋಂಟದ ಸಿದ್ಧಲಿಂಗ ಶಿವಯೋಗಿಗಳು
ನವನಾಳ ಬಿಂದು ಪವನ ಹೃದಯಕಮಲ ಮಧ್ಯದ ದಳವ ಮೆಟ್ಟಿ, ಗಳಿಗೆ ಗಳಿಗೆಗೆ ಚರಿಸುವ ಪರಮಹಂಸನ ಆರಿಗೆಯೂ ಅರಿಯಬಾರದು_ಘಮ್ಮುಘಮ್ಮೆನೆ ಸುತ್ತುವನಲ್ಲದೆ ! ಅದೆಂತೆಂದಡೆ: ``ಪೂರ್ವದಲೇ ಭವೇತ್ ಭಕ್ತಿರಾಗ್ನೇಯಾಂ ಚ ಕ್ಷುಧೈವ ಚ ದಕ್ಷಿಣೇ ಕ್ರೋಧಮುತ್ಪನ್ನಂ ನೈರುತ್ಯಾಂ ಸತ್ಯಮೇವ ಚ ಪಶ್ಚಿಮೇ ತು ಭವೇತ್ ನಿದ್ರಾ ವಾಯವ್ಯಾಂ ಗಮನಸ್ತಥಾ ಉತ್ತರಾಯಾಂ ಧರ್ಮಶೀಲಾವೈಶಾನ್ಯಾಂ ವಿಷಯಸ್ತಥಾ ಅಷ್ಟದಲೇಷು ಮಧ್ಯಸ್ಥಮಾನಚಂದಮಚಲಂ ಶಿವಃ_ಎಂದುದಾಗಿ ಇಂದು ಅಷ್ಟದಳವ ಮೆಟ್ಟಿ ಚರಿಸುವ ಆ ಪರಮಹಂಸನ ತಲೆಗಿಂಬ ಮಾಡಿ ನಿಲಿಸಬಲ್ಲ ನಿಮ್ಮ ಶರಣ ಚನ್ನಬಸವಣ್ಣಂಗೆ ನಾನು ನಮೋ ನಮೋ ಎಂಬೆನು ಗುಹೇಶ್ವರಾ.
--------------
ಅಲ್ಲಮಪ್ರಭುದೇವರು
ಪಟವಾಕಾಶವನಡರಿತ್ತೆಂದಡೆ, ಪಟಸೂತ್ರದ ಸಂಚು ಕೆಳಗಿಪ್ಪುದು ನೋಡಾ ! ವ್ಯೋಮದಲ್ಲಿ ಚರಿಸುವ ಸೋಮಸೂರ್ಯರೆಂದಡೆ ಹೇಮಗಿರಿಯ ಸಂಚ ತಪ್ಪದು ನೋಡಾ ! ಭೂಮಿಯನೊಲ್ಲದೆ ಗಗನಕ್ಕೆ ಹಾರಿದವಂಗೆ, ಆ ವ್ಯೋಮದಲ್ಲಿ ನಿಲುವುದಕ್ಕೆ ಒಂದೆಡೆಯುಂಟೆ ? ನಮ್ಮ ಕೂಡಲಚೆನ್ನಸಂಗನ ಶರಣರೊಳಗಿರ್ದು ಸೀಮೆಯ ಮೀರಿದ ನಿಸ್ಸೀಮನು ಸಿದ್ಧರಾಮಯ್ಯನೆಂಬ ಮಾತು ಅಂತಿರಲಯ್ಯಾ ಪ್ರಭುವೆ.
--------------
ಚನ್ನಬಸವಣ್ಣ
ಚರಿಸುವ ಜನರೆಲ್ಲ ದೇವರಲ್ಲ; ಚರಿಸಿ ಚರಿಸಿ ಭ್ರಮೆಗೊಂಡರು ಮತ್ತೆ ದೇವರು ದೇವರುಎಂದು, ನೋಡಾ. ಚರಿಸುವ ಜನರು ದೇವರು, ಚರಿಸದ ವಸ್ತು ದೇವರು, ನಾ ನೀನೆಂಬುಭಯ ದೇವರು, ಕಪಿಲಸಿದ್ಧಮಲ್ಲಿಕಾರ್ಜುನದೇವರು ದೇವರು.
--------------
ಸಿದ್ಧರಾಮೇಶ್ವರ
ಯಮ, ನಿಯಮ, ಆಸನ, ಪ್ರಾಣಾಯಾಮ, ಪ್ರತ್ಯಾಹಾರ, ಧ್ಯಾನ, ಧಾರಣ, ಸಮಾದ್ಥಿ ಎಂದು ಈಯೆಂಟು ಅಷ್ಟಾಂಗಯೋಗಂಗಳು. ಈ ಯೋಗಂಗಳೊಳಗೆ ಉತ್ತರಭಾಗ, ಪೂರ್ವಭಾಗೆಯೆಂದು ಎರಡು ಪ್ರಕಾರವಾಗಿಹವು. ಯಮಾದಿ ಪಂಚಕವೈದು ಪೂರ್ವಯೋಗ; ಧ್ಯಾನ, ಧಾರಣ, ಸಮಾದ್ಥಿಯೆಂದು ಮೂರು ಉತ್ತರಯೋಗ. ಇವಕ್ಕೆ ವಿವರ: ಇನ್ನು ಯಮಯೋಗ ಅದಕ್ಕೆ ವಿವರ: ಅನೃತ, ಹಿಂಸೆ, ಪರಧನ, ಪರಸ್ತ್ರೀ, ಪರನಿಂದೆ ಇಂತಿವೈದನು ಬಿಟ್ಟು ಲಿಂಗಪೂಜೆಯ ಮಾಡುವುದೀಗ ಯಮಯೋಗ. ಇನ್ನು ನಿಯಮಯೋಗ- ಅದಕ್ಕೆ ವಿವರ: ಬ್ರಹ್ಮಚಾರಿಯಾಗಿ ನಿರಪೇಕ್ಷನಾಗಿ ಆಗಮಧರ್ಮಂಗಳಲ್ಲಿ ನಡೆವವನು. ಶಿವನಿಂದೆಯ ಕೇಳದಿಹನು. ಇಂದ್ರಿಯಂಗಳ ನಿಗ್ರಹವ ಮಾಡುವವನು. ಮಾನಸ, ವಾಚಸ, ಉಪಾಂಶಿಕವೆಂಬ ತ್ರಿಕರಣದಲ್ಲಿ ಪ್ರಣವ ಪಂಚಾಕ್ಷರಿಯ ಸ್ಮರಿಸುತ್ತ ಶುಚಿಯಾಗಿಹನು. ಆಶುಚಿತ್ತವ ಬಿಟ್ಟು ವಿಭೂತಿ ರುದ್ರಾಕ್ಷೆಯ ಧರಿಸಿ ಶಿವಲಿಂಗಾರ್ಚನತತ್ಪರನಾಗಿ ಪಾಪಕ್ಕೆ ಬ್ಥೀತನಾಗಿಹನು. ಇದು ನಿಯಮಯೋಗ. ಇನ್ನು ಆಸನಯೋಗ- ಅದಕ್ಕೆ ವಿವರ: ಸಿದ್ಧಾಸನ, ಪದ್ಮಾಸನ, ಸ್ವಸ್ತಿಕಾಸನ, ಅರ್ಧಚಂದ್ರಾಸನ, ಪರ್ಯಂಕಾಸನ ಈ ಐದು ಆಸನಯೋಗಂಗಳಲ್ಲಿ ಸ್ವಸ್ಥಿರಚಿತ್ತನಾಗಿ ಮೂರ್ತಿಗೊಂಡು ಶಿವಲಿಂಗಾರ್ಚನೆಯ ಮಾಡುವುದೀಗ ಆಸನಯೋಗ. ಇನ್ನು ಪ್ರಾಣಾಯಾಮ- ಅದಕ್ಕೆ ವಿವರ: ಪ್ರಾಣ, ಅಪಾನ, ವ್ಯಾನ, ಉದಾನ, ಸಮಾನ, ನಾಗ, ಕೂರ್ಮ, ಕೃಕರ, ದೇವದತ್ತ, ಧನಂಜಯವೆಂಬ ದಶವಾಯುಗಳು. ಇವಕ್ಕೆ ವಿವರ: ಪ್ರಾಣವಾಯು ಇಂದ್ರ ನೀಲವರ್ಣ. ಹೃದಯಸ್ಥಾನದಲ್ಲಿರ್ದ ಉಂಗುಷ್ಠತೊಡಗಿ ವಾ[ಣಾ]ಗ್ರಪರಿಯಂತರದಲ್ಲಿ ಸತ್ಪ್ರಾಣಿಸಿಕೊಂಡು ಉಚ್ಛಾಸ ನಿಶ್ವಾಸನಂಗೆಯ್ದು ಅನ್ನ ಜೀರ್ಣೀಕರಣವಂ ಮಾಡಿಸುತ್ತಿಹುದು. ಅಪಾನವಾಯು ಹರಿತವರ್ಣ. ಗುಧಸ್ಥಾನದಲ್ಲಿರ್ದು ಮಲಮೂತ್ರಂಗಳ ವಿಸರ್ಜನೆಯಂ ಮಾಡಿಸಿ ಆಧೋದ್ವಾರಮಂ ಬಲಿದು ಅನ್ನರಸ ವ್ಯಾಪ್ತಿಯಂ ಮಾಡಿಸುತ್ತಿಹುದು. ವ್ಯಾನವಾಯು ಗೋಕ್ಷಿರವರ್ಣ. ಸರ್ವಸಂದಿಗಳಲ್ಲಿರ್ದು ನೀಡಿಕೊಂಡಿರ್ದುದನು ಮುದುಡಿಕೊಂಡಿರ್ದುದನು ಅನುಮಾಡಿಸಿ ಅನ್ನಪಾನವ ತುಂಬಿಸುತ್ತಿಹುದು. ಉದಾನವಾಯ ಎಳೆಮಿಂಚಿನವರ್ಣ. ಕಂಠಸ್ಥಾನದಲ್ಲಿರ್ದು ಸೀನುವ, ಕೆಮ್ಮುವ, ಕನಸ ಕಾಣುವ, ಏಳಿಸುವ ಛರ್ದಿ ನಿರೋಧನಂಗಳಂ ಮಾಡಿ ಅನ್ನ ರಸವ ಆಹಾರಸ್ಥಾನಂಗೆಯಿಸುತ್ತಿಹುದು. ಸಮಾನವಾಯು ನೀಲವರ್ಣ. ನಾಬ್ಥಿಸ್ಥಾನದಲ್ಲಿರ್ದು ಅಪಾದಮಸ್ತಕ ಪರಿಯಂತರ ದೇಹಮಂ ಪಸರಿಸಿಕೊಂಡಂಥಾ ಅನ್ನರಸವನು ಎಲ್ಲಾ[ಲೋ] ಮನಾಳಂಗಳಿಗೆ ಹಂಚಿಕ್ಕುವುದು. ಈ ಐದು ಪ್ರಾಣಪಂಚಕ. ಇನ್ನು ನಾಗವಾಯು ಪೀತವರ್ಣ. [ಲೋ] ಮನಾಳಂಗಳಲ್ಲಿರ್ದು ಚಲನೆಯಿಲ್ಲದೆ ಹಾಡಿಸುತ್ತಿಹುದು. ಕೂಮವಾಯುವ ಶ್ವೇತವರ್ಣ. ಉದರ ಲಲಾಟದಲ್ಲಿರ್ದು ಶರೀರಮಂ ತಾಳ್ದು [ದೇಹಮಂ] ಪುಷ್ಟಿಯಂ ಮಾಡಿಕೊಂಡು ಬಾಯ ಮುಚ್ಚುತ್ತ ತೆರೆವುತ್ತ ನೇತ್ರದಲ್ಲಿ ಉನ್ಮೀಲನ ನಿಮೀಲನವಂ ಮಾಡಿಸುತ್ತಿಹುದು. ಕೃಕರವಾಯು ಅಂಜನವರ್ಣ. ನಾಸಿಕಾಗ್ರದಲ್ಲಿರ್ದು ಕ್ಷುಧಾದಿ ಧರ್ಮಂಗಳಂ ನೆಗಳೆ ಗಮನಾಗಮನಂಗಳಂ ಮಾಡಿಸುತ್ತಿಹುದು. ದೇವದತ್ತವಾಯು ಸ್ಫಟಿಕವರ್ಣ. ಗುಹ್ಯ[ಕಟಿ] ಸ್ಥಾನದಲ್ಲಿರ್ದು ಕುಳ್ಳಿರ್ದಲ್ಲಿ ಮಲಗಿಸಿ, ಮಲಗಿರ್ದಲ್ಲಿ ಏಳಿಸಿ ನಿಂದಿರಿಸಿ ಚೇತರಿಸಿ ಒರಲಿಸಿ ಮಾತಾಡಿಸುತ್ತಿಹುದು. ಧನಂಜಯವಾಯು ನೀಲವರ್ಣ. ಬ್ರಹ್ಮರಂಧ್ರದಲ್ಲಿರ್ದು ಕರ್ಣದಲ್ಲಿ ಸಮುದ್ರಘೋಷಮಂ ಘೋಷಿಸಿ ಮರಣಗಾಲಕ್ಕೆ ನಿರ್ಘೋಷಮಪ್ಪುದು. ಈ ಪ್ರಕಾರದಲ್ಲಿ ಮೂಲವಾಯುವೊಂದೇ ಸರ್ವಾಂಗದಲ್ಲಿ ಸರ್ವತೋಮುಖವಾಗಿ ಚರಿಸುತ್ತಿಹುದು. ಆ ಪವನದೊಡನೆ ಪ್ರಾಣ ಕೂಡಿ ಪ್ರಾಣದೊಡನೆ ಪವನ ಕೂಡಿ ಹೃದಯ ಸ್ಥಾನದಲ್ಲಿ ನಿಂದು ಹಂಸನೆನಿಸಿಕೊಂಡು ಆಧಾರ, ಸ್ವಾದ್ಥಿಷ್ಠಾನ, ಮಣಿಪೂರಕ, ಅನಾಹತ, ವಿಶುದ್ಧಿ, ಆಗ್ನೇಯ ಎಂಬ ಷಡುಚಕ್ರದಳಂಗಳಮೇಲೆ ಸುಳಿದು ನವನಾಳಂಗಳೊಳಗೆ ಚರಿಸುತ್ತಿಹುದು. ಅಷ್ಟದಳಂಗಳೇ ಆಶ್ರಯವಾಗಿ ಅಷ್ಟದಳಂಗಳ ಮೆಟ್ಟಿ ಚರಿಸುವ ಹಂಸನು ಅಷ್ಟದಳಂಗಳಿಂದ ವಿಶುದ್ಧಿಚಕ್ರವನೆಯ್ದಿ ಅಲ್ಲಿಂದ ನಾಸಿಕಾಗ್ರದಲ್ಲಿ ಹದಿನಾರಂಗುಲ ಪ್ರಮಾಣ ಹೊರಸೂಸುತ್ತಿಹುದು; ಹನ್ನೆರಡಂಗುಲ ಪ್ರಮಾಣ ಒಳಗೆ ತುಂಬುತ್ತಿಹುದು. ಹೀಂಗೆ ರೇಚಕ ಪೂರಕದಿಂದ ಮರುತ ಚರಿಸುತ್ತಿರಲು ಸಮಸ್ತ್ರ ಪ್ರಾಣಿಗಳ ಆಯುಷ್ಯವು ದಿನ ದಿನಕ್ಕೆ ಕುಂದುತ್ತಿಹುದು. ಹೀಂಗೆ ಈಡಾ ಪಿಂಗಳದಲ್ಲಿ ಚರಿಸುವ ರೇಚಕ ಪೂರಕಂಗಳ ಭೇದವನರಿದು ಮನ ಪವನಂಗಳ ಮೇಲೆ ಲಿಂಗವ ಸಂಬಂದ್ಥಿಸಿ ಮನ ಪವನ ಪ್ರಾಣಂಗಳ ಲಿಂಗದೊಡನೆ ಕೂಡಿ ಲಿಂಗ ಸ್ವರೂಪವ ಮಾಡಿ ವಾಯು ಪ್ರಾಣತ್ವವ ಕಳೆದು ಲಿಂಗ ಪ್ರಾಣಿಯ ಮಾಡಿ ಹೃದಯ ಕಮಲ ಮಧ್ಯದಲ್ಲಿ ಪ್ರಣವವನುಚ್ಚರಿಸುತ್ತ ಪರಶಿವ ಧ್ಯಾನದಲ್ಲಿ ತರಹರವಾಗಿಪ್ಪುದೀಗ ಪ್ರಾಣಾಯಾಮ. ಇನ್ನು ಪ್ರತ್ಯಾಹಾರಯೋಗ-ಅದಕ್ಕೆ ವಿವರ: ಆಹಾರದಿಂ ನಿದ್ರೆ, ನಿದ್ರೆಯಿಂ ಇಂದ್ರಿಯಂಗಳು, ಇಂದ್ರಿಯಂಗಳಿಂದ ವಿಷಯಂಗಳು ಘನವಾಗುತ್ತಿಹುವು ನೋಡಾ. ಆ ವಿಷಯದಿಂದ ದುಃಕರ್ಮಗಳ ಮಿಗೆ ಮಾಡಿ ಜೀವಂಗೆ ಭವ ಭವದ ಬಂಧನವನೊಡಗೂಡಿ ಆಯಸಂ ಬಡುತ್ತಿಪ್ಪರಜ್ಞ್ಞಾನ ಕರ್ಮಿಗಳು; ಈ ಅವಸ್ಥೆಯ ಹೊಗದಿಹರು ಸುಜ್ಞಾನಿ ಧರ್ಮಿಗಳು. ಅದರಿಂದಲಾಹಾರಮಂ ಕ್ರಮ ಕ್ರಮದಿಂದ ಉದರಕ್ಕೆ ಹವಣಿಸುತ್ತ ಬಹುದು. ಗುರು ಕೃಪೆಯಿಂದ ಈ ಪ್ರಕಾರದಲ್ಲಿ ಸರ್ವೇಂದ್ರಿಯಂಗಳನು ಲಿಂಗಮುಖದಿಂದ ಸಾವಧಾನವ ಮಾಡಿಕೊಂಡಿಪ್ಪುದೀಗ ಪ್ರತ್ಯಾಹಾರಯೋಗ. ಈ ಐದು ಪೂರ್ವಯೋಗಂಗಳು. ಇನ್ನು ಧ್ಯಾನ, ಧಾರಣ, ಸಮಾದ್ಥಿಯೆಂದು ಮೂರು ಉತ್ತರಯೋಗಂಗಳು. ಇನ್ನು ಧ್ಯಾನಯೋಗ- ಅದಕ್ಕೆ ವಿವರ: ಅಂತರಂಗದ ಶುದ್ಧ ಪರಮಾತ್ಮ ಲಿಂಗವನೇ ಶಿವಲಿಂಗ ಸ್ವರೂಪವ ಮಾಡಿ ಕರಸ್ಥಲಕ್ಕೆ ಶ್ರೀಗುರು ತಂದು ಕೊಟ್ಟನಾಗಿ ಆ ಕರಸ್ಥಲದಲ್ಲಿದ್ದ ಶಿವಲಿಂಗವೇ ಪರಮಾರ್ಥಚಿಹ್ನವೆಂದರಿದು ಆ ಲಿಂಗವನೇ ಆಧಾರ, ಸ್ವಾದ್ಥಿಷ್ಠಾನ, ಮಣಿಪೂರಕ, ಅನಾಹತ, ವಿಶುದ್ಧಿ, ಆಜ್ಞೇಯ, ಬ್ರಹ್ಮರಂಧ್ರ ಮುಖ್ಯವಾದ ಸ್ಥಾನಂಗಳಲ್ಲಿ ಆ ಶಿವಲಿಂಗಮೂರ್ತಿಯನೆ ಆಹ್ವಾನ ವಿಸರ್ಜನೆಯಿಲ್ಲದೆ ಧ್ಯಾನಿಪುದೀಗ ಧ್ಯಾನಯೋಗ. ಆ ಲಿಂಗವ ಭಾವ, ಮನ, ಕರಣ ಮುಖ್ಯವಾದ ಸರ್ವಾಂಗದಲ್ಲಿ ಧರಿಸುವುದೀಗ ಧಾರಣಯೋಗ. ಆ ಸತ್ಕಿ ್ರಯಾ ಜ್ಞಾನಯೋಗದಿಂದ ಪ್ರಾಣಂಗೆ ಶಿವಕಳೆಯ ಸಂಬಂದ್ಥಿಸಿ ಇಷ್ಟ, ಪ್ರಾಣ, ಭಾವವೆಂಬ ಲಿಂಗತ್ರಯವನು ಏಕಾಕಾರವ ಮಾಡಿ ಅಖಂಡ ಪರಿಪೂರ್ಣ ಕೇವಲ ಪರಂಜ್ಯೋತಿ ಸ್ವರೂಪವಪ್ಪ ಮಹಾಲಿಂಗದೊಳಗೆ ಸಂಯೋಗವಾಗಿ ಬ್ಥಿನ್ನವಿಲ್ಲದೆ ಏಕಾರ್ಥವಾಗಿಹುದೀಗ ಸಮಾದ್ಥಿಯೋಗ. ಇಂತೀ ಅಷ್ಟಾಂಗಯೋಗದಲ್ಲಿ ಶಿವಲಿಂಗಾರ್ಚನೆಯ ಮಾಡಿ ಶಿವತತ್ವದೊಡನೆ ಕೂಡುವುದೀಗ ಲಿಂಗಾಂಗಯೋಗ. ಇನ್ನು ಕರ್ಮಕಾಂಡಿಗಳು ಮಾಡುವ ಕರ್ಮಯೋಗಂಗಳು- ಅವಾವವೆಂದಡೆ: ಯಮ, ನಿಯಮ, ಆಸನ, ಪ್ರಾಣಾಯಾಮ, ಪ್ರತ್ಯಾಹಾರವೆಂಬ ಈ ಐದನು ಲಿಂಗವಿರಹಿತವಾಗಿ ಮಾಡುತ್ತಿಪ್ಪರಾಗಿ ಈ ಐದು ಕರ್ಮಯೋಗಂಗಳು. ಅವರು ಲಕ್ಷಿಸುವಂಥಾ ವಸ್ತುಗಳು ಉತ್ತರಯೋಗವಾಗಿ ಮೂರು ತೆರ. ಅವಾವವೆಂದಡೆ: ನಾದಲಕ್ಷ ್ಯ, ಬಿಂದುಲಕ್ಷ ್ಯ, ಕಲಾಲಕ್ಷ ್ಯವೆಂದು ಮೂರು ತೆರ. ನಾದವೇ ಸಾಕ್ಷಾತ್ ಪರತತ್ವವೆಂದೇ ಲಕ್ಷಿಸುವರು. ಬಿಂದುವೇ ಆಕಾರ, ಉಕಾರ, ಮಕಾರ, ಈ ಮೂರು ಶುದ್ಧಬಿಂದು ಸಂಬಂಧವೆಂದೂ. ಆ ಶುದ್ಧ ಬಿಂದುವೇ ಕೇವಲ ದಿವ್ಯ ಪ್ರಕಾಶವನುಳ್ಳದೆಂದೂ ಲಕ್ಷಿಸುವರು. ಕಲೆಯೇ ಚಂದ್ರನ ಕಲೆಯ ಹಾಂಗೆ, ಸೂರ್ಯನ ಕಿರಣಂಗಳ ಹಾಂಗೆ, ಮಿಂಚುಗಳ ಪ್ರಕಾಶದ ಹಾಂಗೆ, ಮುತ್ತು, ಮಾಣಿಕ್ಯ, ನವರತ್ನದ ದೀಪ್ತಿಗಳ ಹಾಂಗೆ, ಪ್ರಕಾಶಮಾಯವಾಗಿಹುದೆಂದು ಲಕ್ಷಿಸುವುದೀಗ ಕಲಾಲಕ್ಷ ್ಯ. ಈ ಎಂಟು ಇತರ ಮತದವರು ಮಾಡುವ ಯೋಗಂಗಳು. ಇವ ಲಿಂಗವಿರಹಿತವಾಗಿ ಮಾಡುವರಾಗಿ ಕರ್ಮಯೋಗಂಗಳು. ಈ ಕರ್ಮಕೌಶಲ್ಯದಲ್ಲಿ ಲಿಂಗವಿಲ್ಲ ನೋಡಾ. ಅದುಕಾರಣ ಇವ ಮುಟ್ಟಲಾಗದು. ಇನ್ನು ವೀರಮಾಹೇಶ್ವರರುಗಳ ಲಿಂಗಸಂಧಾನವೆಂತೆಂದರೆ: ಬ್ರಹ್ಮರಂಧ್ರದಲ್ಲಿಪ್ಪ ನಾದ ಚೈತನ್ಯವಪ್ಪ ಪರಮ ಚಿತ್ಕಲೆಯನೇ ಭಾವ, ಮನ, ಕರದಲ್ಲಿ ಶ್ರೀಗುರು ತಂದು ಸಾಹಿತ್ಯವ ಮಾಡಿದನಾಗಿ ಭಾವದಲ್ಲಿ ಸತ್ತ್ವರೂಪವಪ್ಪ ಭಾವಲಿಂಗವೆನಿಸಿ, ಪ್ರಾಣದಲ್ಲಿ ಚಿತ್ ಸ್ವರೂಪವಪ್ಪ ಪ್ರಾಣಲಿಂಗವೆನಿಸಿ, ಕರಸ್ಥಲದಲ್ಲಿ ಆನಂದ ಸ್ವರೂಪವಪ್ಪ ಇಷ್ಟಲಿಂಗವೆನಿಸಿ, ಒಂದೇ ವಸ್ತು ತನು, ಮನ, ಭಾವಂಗಳಲ್ಲಿ ಇಷ್ಟ, ಪ್ರಾಣ, ಭಾವವಾದ ಭೇದವನರಿದು ಇಷ್ಟಲಿಂಗವ ದೃಷ್ಟಿಯಿಂದ ಗ್ರಹಿಸಿ ಪ್ರಾಣಲಿಂಗವ ಮನಜ್ಞಾನದಿಂದ ಗ್ರಹಿಸಿ ತೃಪ್ತಿಲಿಂಗವ ಭಾವಜ್ಞಾನದಿಂದ ಗ್ರಹಿಸಿ ಈ ಲಿಂಗತ್ರಯವಿಡಿದಾಚರಿಸಿ ಲಿಂಗದೊಡನೆ ಕೂಡಿ ಲಿಂಗವೇ ತಾನು ತಾನಾಗಿ ವಿರಾಜಿಸುತ್ತಿಪ್ಪುದೀಗ ಶಿವಯೋಗ ನೋಡಾ, ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.
--------------
ತೋಂಟದ ಸಿದ್ಧಲಿಂಗ ಶಿವಯೋಗಿಗಳು
ವಿಕಾರದೊಳು ವಿಕಾರ ಕಪಿವಿಕಾರ. ವಿಕಾರದೊಳು ವಿಕಾರ ಸುರೆಗುಡಿದವನ ವಿಕಾರ. ವಿಕಾರದೊಳು ವಿಕಾರ ದತ್ತೂರಿಯ ಸವಿದ ವಿಕಾರ. ಇಂತೀ ಎಲ್ಲಕೆ ಗುರು ಮನೋವಿಕಾರವೆಂಬುದು. ಸುರೆ ದತ್ತೂರಿಯ ಸವಿದವನದು ಒಂದಿನಕಾದರೂ ಪರಿಹಾರವಾಗುವದು. ಮನೋವಿಕಾರದ ದತ್ತೂರಿ ಅನುದಿನ ತಲೆಹೇರಿಕೊಂಡು ಮುಳುಗಿತ್ತು. ಭೂಲೋಕದ ಯತಿ ಸಿದ್ಧ ಸಾಧ್ಯರ ಕೊಂಡು ಮುಳುಗಿತ್ತು. ದೇವಲೋಕದ ದೇವಗಣ ಅಜಹರಿಸುರರ ಜನನಮರಣವೆಂಬ ಅಣಲೊಳಗಿಕ್ಕಿತ್ತು ಮನೋವಿಕಾರ. ಮನೋವಿಕಾರದಿಂದ ತನುವಿನಕಾರ, ಮನೋವಿಕಾರದಿಂದ ಮಾಯಾಮದ. ಮನೋವಿಕಾರದಿಂದ ಪಂಚಭೂತ ಸಪ್ತಧಾತು ದಶವಾಯು ಅರಿಷಡ್ವರ್ಗ ಅಷ್ಟಮದ ಪಂಚೇಂದ್ರಿಯ, ಅಂಗದೊಳು ಚರಿಸುವ ಜೀವ ಪ್ರಾಣ ಕರಣಾದಿ ಗುಣಂಗಳೆಲ್ಲಕ್ಕೆಯು ಮನವೆ ಮುಖ್ಯ ನೋಡಾ. ಮನೋವಿಕಾರವನಳಿದು ಶಿವವಿಕಾರದೊಳು ಇಂಬುಗೊಂಡಾತ ಮೂರುಲೋಕಾರಾಧ್ಯನೆಂಬೆನು ಕಾಣಾ ಪರಮಗುರು ಪಡುವಿಡಿ ಸಿದ್ಧಮಲ್ಲಿನಾಥಪ್ರಭುವೆ.
--------------
ಹೇಮಗಲ್ಲ ಹಂಪ
ಚರಿಸುವ ಚರನಿಗೆ ಚರ್ಚೆಯೆ ಭೂಷಣ. ಸುಂದರ ನಾರಿಗೆ ಗಂಬ್ಥೀರ ಪುರುಷನೆ ಭೂಷಣ. ಕೊಳನಲ್ಲಿಯ ನೀರಿಗೆ ಕಲಹಂಸೆಯೆ ಭೂಷಣ. ವನದಲ್ಲಿಯ ವಸಂತಕ್ಕೆ ಕೋಕಿಲನಾದವೆ ಭೂಷಣ. ನಮ್ಮ ಕಪಿಲಸಿದ್ಧಮಲ್ಲಿಕಾರ್ಜುನನ ಶರಣರಿಗೆ ನಿರ್ಮಲ ನಿಜಾನಂದವೆ ಭೂಷಣ.
--------------
ಸಿದ್ಧರಾಮೇಶ್ವರ
ಅಯ್ಯ, ನಿವೃತ್ತಿಮಾರ್ಗದಲ್ಲಿ ಚರಿಸುವ ಊಧ್ವಕುಂಡಲಿ ಭೇದವೆಂತೆಂದಡೆ : ಕಿಂಕುರ್ವಾಣಭಕ್ತಿಯೆ ಅಂಗವಾಗಿರ್ಪುದಯ್ಯ. ಸದ್ಗುಣವೆ ಪ್ರಾಣವಾಗಿರ್ಪುದಯ್ಯ. ಸದ್ಧರ್ಮವೆ ಸಂಗವಾಗಿರ್ಪುದಯ್ಯ. ಸಚ್ಚಿದಾನಂದವೆ ವಸ್ತ್ರಾಭರಣವಾಗಿರ್ಪುದಯ್ಯ. ಸನ್ಮಾರ್ಗಾಚಾರಂಗಳೆ ನಡೆನುಡಿಯಾಗಿರ್ಪುದಯ್ಯ. ಸುಸತ್ಯವೆ ವಾಹನವಾಗಿರ್ಪುದಯ್ಯ. ದಯಾಂತಃಕರಣವೆ ಪಿತಮಾತೆಯಾಗಿರ್ಪುದಯ್ಯ. ಸುಚಿತ್ತಂಗಳೆ ಬಂಧುಬಳಗವಾಗಿರ್ಪುದಯ್ಯ. ಸುಬುದ್ಧಿಗಳೆ ಒಡಹುಟ್ಟಿದರಾಗಿರ್ಪುದಯ್ಯ. ನಿರಹಂಕಾರಂಗಳೆ ನಂಟರಾಗಿರ್ಪುದಯ್ಯ. ಸುಮನವೆ ಸ್ತ್ರೀಯಳಾಗಿರ್ಪುದಯ್ಯ. ಸುಜ್ಞಾನವೇ ಮಂದಿರವಾಗಿರ್ಪುದಯ್ಯ. ಸದ್ಭಾವವೆ ಆಹಾರವಾಗಿರ್ಪುದಯ್ಯ. ನಿತ್ಯನಿಜವೇ ದೈವವಾಗಿರ್ಪುದಯ್ಯ. ನಿರಾಸೆಯೆ ಅವಯವಂಗಳಾಗಿರ್ಪುದಯ್ಯ. ನಿಷ್ಕಾಮಂಗಳೆ ಧನಧಾನ್ಯಂಗಳಾಗಿರ್ಪುದಯ್ಯ. ಇಂತು ನಿಸ್ಸಂಸಾರವೆಂಬ ಅವಿರಳಾನದಿಂದ ಸದ್ಗುರು ಉಪಾವಸ್ತೆಯ ಮಾಡುವ ಸಜ್ಜೀವನೆ ಊಧ್ರ್ವಕುಂಡಲಿಸರ್ಪವೆನಿಸುವುದಯ್ಯ. ಆ ಸರ್ಪನೆ ಮಾಯಾಪ್ರಪಂಚ ಹೇವರಿಸಿ ಅನಂತಮುಖದಿಂದ ನಿರ್ಮಾಯಸ್ವರೂಪವಾದ ಮಹಾಪ್ರಮಥಗಣಂಗಳತ್ತ ಅಬ್ಥಿಮುಖವಾಗಿರ್ಪುದಯ್ಯ. ಈ ಸರ್ಪಂಗೆ ಬೇಕುಬೇಡವೆಂಬ ಜೀಹ್ವಾಲಂಪಟ-ಗುಹ್ಯಲಂಪಟವಿಲ್ಲ ನೋಡ, ಸಂಗನಬಸವೇಶ್ವರ.
--------------
ಗುರುಸಿದ್ಧದೇವರು
ಮಾತು ಮಾತಿನ ತೂತಜ್ಞಾನಿಗಳಿಗೆತ್ತಣ ಶರಣಸ್ಥಲವಯ್ಯಾ? ಸೋತು ನಡೆಯರು ಗುರುಹಿರಿಯರಿಗೆ ಖ್ಯಾತಿಯ ಮುಂದಿಟ್ಟು ಮಲತ್ರಯದಾಸೆಯೊಳು ಮುಳುಗಿ. ಇತರರ್ಗೆ ನೀತಿ ನೂತನದಿಂದೆ ಜರಿದು ತನ್ನನರಿಯದೆ ಭಿನ್ನವಿಟಟು ಮನಗೂಡಿ ಚರಿಸುವ ಶುನಕರು ಶರಣರೆಂದರೆ ಸರಿಯಪ್ಪುದೆ? ನಾಚಿಕೆಯಿಲ್ಲದ ನಾಡಭೂತಗಳನೆನಗೊಮ್ಮೆ ತೋರದಿರಯ್ಯಾ ನಿಮ್ಮ ಧರ್ಮ ಗುರುನಿರಂಜನ ಚನ್ನಬಸವಲಿಂಗಾ.
--------------
ದೇಶಿಕೇಂದ್ರ ಸಂಗನಬಸವಯ್ಯ
ಅಯ್ಯ, ಇನ್ನು ಪ್ರವೃತ್ತಿ-ನಿವೃತ್ತಿ ಅಧೋಕುಂಡಲಿ-ಊಧ್ರ್ವಕುಂಡಲಿಗಳೆಂಬ ಉಭಯಮಾರ್ಗವ ಶಿವಾಜ್ಞೆಯಿಂದ ತೀರ್ಚಿಸಿ, ಶಿವಯೋಗ, ಶಿವಾಚಾರ, ಶಿವಭಕ್ತಿ, ಶಿವಾನಂದಪರಿಣಾಮದಲ್ಲಿ ಚರಿಸುವ ಮಧ್ಯಕುಂಡಲಿಸ್ವರೂಪವಾದ ಮಹಾಶೇಷನ ಭೇದವೆಂತೆಂದಡೆ : ಷೋಡಶ ವರ್ಣವೆ ಅಂಗವಾಗಿರ್ಪುದಯ್ಯ. ಸರ್ವಾಚಾರಸಂಪತ್ತಿನಾಚರಣೆಯ ಪ್ರಾಣವಗಿರ್ಪುದಯ್ಯ. ಚತುರ್ದಶಪ್ರಣಮಂಗಳೆ ತತ್ಸಂಗವಾಗಿರ್ಪುದಯ್ಯ. ಭಕ್ತಿ-ಜ್ಞಾನ-ವೈರಾಗ್ಯ-ಷಟ್ಸ್ಥಲವೆ ವಸ್ತ್ರಾಭರಣವಾಗಿರ್ಪುದಯ್ಯ. ಹರಗುರುವಾಕ್ಯವೆ ನಡೆನುಡಿಯಾಗಿರ್ಪುದಯ್ಯ. ಪಂಚಾಚಾರಂಗಳೆ ವಾಹನವಾಗಿರ್ಪುದಯ್ಯ. ಕರುಣ-ವಿನಯ-ಸಮತಾ-ಶುದ್ಧ-ಸಿದ್ಧ-ಪ್ರಸಿದ್ಧವೆ ಪಿತಮಾತೆಯಾಗಿರ್ಪುದಯ್ಯ. ಚತುರ್ವರ್ಣ ಮೊದಲಾಗಿ ಬಾವನ್ನವರ್ಣಂಗಳೆ ಬಂಧುಬಳಗವಾಗಿರ್ಪುದಯ್ಯ. ಷಡಕ್ಷರಮಂತ್ರ ಮೊದಲಾಗಿ ನೂರೆಂಟು ಮಂತ್ರಮಾಲಿಕೆಯ ಒಡಹುಟ್ಟಿದರಾಗಿರ್ಪುದಯ್ಯ. ಸಪ್ತಕೋಟಿ ಮಹಾಮಂತ್ರಂಗಳೆ ನಂಟರಾಗಿರ್ಪುದಯ್ಯ. ಷೋಡಶಭಕ್ತಿಗಳೆ ಅರ್ಧಾಂಗಿಯಾಗಿರ್ಪುದಯ್ಯ. ನೂರೆಂಟು ಸಕೀಲು ಮೊದಲಾಗಿ ಸಮಸ್ತಸಕೀಲಂಗಳೆ ಮಂದಿರವಾಗಿರ್ಪುದಯ್ಯ. ಸ್ವಾನುಭಾವಸೂತ್ರವೆ ನಿತ್ಯತೃಪ್ತಿಯಾಗಿರ್ಪುದಯ್ಯ. ಮಹಾಪ್ರಕಾಶಸ್ವರೂಪವಾದ ಚಿದ್ಬೆಳಗೆ ದೈವವಾಗಿರ್ಪುದಯ್ಯ. ಷೋಡಶಾವಧಾನಂಗಳೆ ಅವಯವಂಳಾಗಿರ್ಪುದಯ್ಯ. ನಿಜನೈಷೆ*, ನಿರ್ಲಜ್ಜೆ, ನಿರಾಸೆಯೆಂಬ ನಿಷ್ಪ್ರಪಂಚವೆ ಧನಧಾನ್ಯವಾಗಿರ್ಪುದಯ್ಯ. ಇಂತು ನಿಷ್ಕಳಂಕ ಪರಮಾನಂದವೆಂಬ ಸತ್ತುಚಿತ್ತಾನಂದ ನಿತ್ಯಪರಿಪೂರ್ಣ ಅವಿರಳಪರಂಜ್ಯೋತಿಸ್ವರೂಪದಿಂದ ಕನ್ನಡಿಯ ಪ್ರತಿಬಿಂಬದಂತೆ, ಇಹಪರಗಳೆಂಬ ಅಧೋಕುಂಡಲಿ ಊಧ್ರ್ವಕುಂಡಲಿಯೆಂಬ ಉಭಯಮಧ್ಯದಲ್ಲಿ ನೆಲಸಿರ್ಪ ಪರತತ್ವವೆ ಶಿವಭಕ್ತನೆಂಬ ಮಧ್ಯನಾಮವುಳ್ಳ ಮಹಾಶೇಷ ನೋಡ ಸಂಗನಬಸವೇಶ್ವರ.
--------------
ಗುರುಸಿದ್ಧದೇವರು
ಅಯ್ಯ, ಶ್ರೀಗುರುಲಿಂಗಜಂಗಮವೇ ರುದ್ರಲೋಕದ ರುದ್ರಗಣಂಗಳಿಗೆ, ಶಾಂಭವಲೋಕದ ಶಾಂಭವಗಣಂಗಳಿಗೆ, ನಾಗಲೋಕದ ನಾಗಗಣಂಗಳಿಗೆ, ದೇವಲೋಕದ ದೇವಗಣಂಗಳಿಗೆ, ಮರ್ತೃಲೋಕದ ಮಹಾಗಣಂಗಳಿಗೆ ಅವರವರ ಮನ-ಭಾವ-ಕಾರಣಂಗಳು ಹೇಗುಂಟೊ ಹಾಂಗೆ ಆಯಾಯ ಪ್ರಸನ್ನೇತಿ ಪ್ರಸಾದವಾಗಿರ್ಪರು ನೋಡ. ಸ್ವರ್ಗ-ಮರ್ತೃ-ಪಾತಾಳಲೋಕದಲ್ಲಿ ಚರಿಸುವ ಹÀರಿಸುರಬ್ರಹ್ಮಾದಿ ದೇವದಾನವಮಾನವ ಮನಮುನಿಗಳೆಲ್ಲ ಅತ್ಯತಿಷ*ದ್ದಶಾಂಗುಲವೆಂದು ಹೊಗಳುವ ಶ್ರುತಿಯಂತೋ ಹಾಂಗೆ ಅವರವರ ಮನದಂತೆ ಮಹಾದೇವನಾಗಿ ಫಲಪದಂಗಳ ಕೊಟ್ಟು, ದುಷ್ಟನಿಗ್ರಹ ಶಿಷ್ಟಪ್ರತಿಪಾಲಕತ್ವದಿಂದ ಸರ್ವಲೋಕಂಗಳಿಗೆಲ್ಲ ಸೂತ್ರಧಾರಿಗಳಾಗಿರ್ಪರು ನೋಡ. ಇಂತು ಏಕಮೇವ ಪರಬ್ರಹ್ಮವೆಂಬ ಶ್ರುತಿಯ ದಿಟವಮಾಡಿ ಪರಮಸ್ವಸ್ಥಿರದ ಮಂಡಲದ ಮೇಲೆ ಶಿವ-ಶಕ್ತಿ, ಅಂಗ-ಲಿಂಗವೆಂಬ ಉಭಯನಾಮವಳಿದು ಶಿಷ್ಯರೂಪಿನಿಂದ ಕುಳ್ಳಿರಿಸಿ ದೀಕ್ಷಾಪಾದೋದಕ ಮಿಶ್ರವಾದ ಗೋಮೂತ್ರದಿಂದ ಸಪ್ತವ್ಯಸನ ಸಂಬಂಧವಾದಂಗ, ಸಪ್ತಧಾತುಸಂಬಂಧವಾದ ಲಿಂಗ, ಇಂತು ಅಂಗದ ಮಲಿನಭಾವ, ಲಿಂಗದ ಶಿವಭಾವವ ಕಳದು, ಕ್ಷೀರ, ಘೃತ, ರಂಭಾ, ಇಕ್ಷು, ಮಧುಯುಕ್ತವಾದ ರಸಪಂಚಾಮೃತವ ಜಂಗಮಚರಣೋದಕ ಮಿಶ್ರದಿಂದ ಅಭಿಷೇಕಮಾಡಿಸಿ, ಅದರಿಂ ಮೇಲೆ ಗುರುಪಾದೋದಕದಲ್ಲಿ ಶರಣಗಣಂಗಳು ಹಸ್ತೋದಕ, ಮಂತ್ರೋದಕ, ಶುದ್ಧೋದಕ, ಗಂಧೋದಕ, ಪುಷ್ಪೋದಕವೆಂಬ ಪಂಚಪರಮಾನಂದ ಜಲದಿಂದ ಅಭ್ಯಂಗಸ್ನಾನ ಮಾಡಿಸಿ, ಹಿಂದು-ಮುಂದಣ ಕಾಲಕಾಮರ ಭಯಕ್ಕೆ ಅಂಜಬೇಡವೆಂದು ತ್ರಿವಿಧಂಗುಲಪ್ರಮಾಣವಾದ ದರ್ಭೆಯ ಅಂತು ಮಾಡಿ ತ್ರಿವಿಧಮಂತ್ರಸ್ಮರಣೆಯಿಂದ ಕಟಿಯಲ್ಲಿ ಧರಿಸಿದರಯ್ಯ. ಆರುವೈರಿಗಳಿಗೆ ಒಳಗಾಗಬೇಡವೆಂದು ಷಡಂಗುಲಪ್ರಮಾಣವಾದ ರಂಭಾಪಟ್ಟೆಯ ಕೌಪೀನವ ಮಾಡಿ ಷಡಕ್ಷರಮಂತ್ರಸ್ಮರಣೆಯಿಂದ ಹರಿಯಜದ್ವಾರಗಳ ಬಂಧಿಸಿದರಯ್ಯ. ಅದರಿಂದ ಮೇಲೆ ನಾರಂಗಶಾಟಿಯ ಪವಿತ್ರತೆಯಿಂ ಹೊದ್ದಿಸಿ, ಶ್ರೀ ಗುರುದೇವನ ಚರಣಕಮಲಕ್ಕೆ ಅಷ್ಟಾಂಗಪ್ರಣಿತನ ಮಾಡಿಸಿ, ಶಿವಶರಣ ಭಕ್ತ ಮಾಹೇಶ್ವರರುಗಳಿಗೆ ಹುಸಿಯ ನುಡಿಯದೆ, ದಿಟವ ಬಿಡದೆ, ಆಪ್ತತ್ವದಿಂದ ನಡೆ-ನುಡಿ, ಕೊಟ್ಟುಕೊಂಬ ವಿಚಾರಂಗಳ ಶ್ರುತಮಾಡಿದಲ್ಲಿ ಶ್ರೀ ಗುರುದೇವನು ಶರಣಗಣ ಒಪ್ಪಿಗೆಯಿಂದ ಶಿಷ್ಯನ ಮಸ್ತಕದ ಮೇಲೆ ಅಭಯಹಸ್ತವನ್ನಿಟ್ಟು, ಗುರುಶಿಷ್ಯಭಾವವಳಿದು, ಗುರುವಿನ ಸೂತ್ರದ ಶಿಷ್ಯಹಿಡಿದು, ಶಿಷ್ಯನ ಸೂತ್ರವ ಗುರುವು ಹಿಡಿದು, ಅಂತರಂಗಬಹಿರಂಗದಲ್ಲಿ ಶಿವಯೋಗಾನುಸಂಧಾನದಿಂದ ಏಕರೂಪವಾಗಿ ಭೃತ್ಯರಿಂದ ಕಳಸಾರ್ಚನೆಯ ರಚಿಸಿ, ಪ್ರಮಥಗಣಾರಾಧ್ಯ ಭಕ್ತಮಾಹೇಶ್ವರರೊಡಗೂಡಿ ನವರತ್ನಖಚಿತವಾದ ಶೂನ್ಯಸಿಂಹಾಸನದ ಮೇಲೆ ಮೂರ್ತಿಗೊಂಡಿರುವಂಥ ಮಂತ್ರಮೂರ್ತಿ ನಿರಂಜನಜಂಗಮಕ್ಕೆ ವಿಭೂತಿ ವೀಳ್ಯ, ಸುವರ್ಣಕಾಣಿಕೆ, ದಶಾಂಗಘನಸಾರ, ಪುಷ್ಪದಮಾಲೆ, ವಸ್ತ್ರಾಭರಣ ಮೊದಲಾಗಿ ಸಪ್ತಪದಾರ್ಥಂಗಳ ಪ್ರಮಥಗಣಾರಾಧ್ಯ ಭಕ್ತಮಾಹೇಶ್ವರ ಮಧ್ಯದಲ್ಲಿ ಇಟ್ಟು ಅಷ್ಟಾಂಗಯುಕ್ತರಾಗಿ ಸ್ವಸ್ಥದೃಢಚಿತ್ತದಿಂದ ಬಹು ಪರಾಕು ಭವರೋಗ ವೈದ್ಯನೆ ಎಂದು ತ್ರಿಕರಣಶುದ್ಧತಿಯಿಂದ ಅಭಿವಂದಿಸುವಂಥಾದ್ದೆ ಸ್ವಸ್ತಿಕಾರೋಹಣದೀಕ್ಷೆ. ಇಂತುಟೆಂದು ಶ್ರೀ ಗುರುನಿಷ್ಕಳಂಕಮೂರ್ತಿ ಚೆನ್ನಬಸವರಾಜೇಂದ್ರನು ನಿರ್ಲಜ್ಜಶಾಂತಲಿಂಗದೇಶಿಕೋತ್ತಮಂಗೆ ನಿರೂಪಮಂ ಕೊಡುತಿರ್ದರು ನೋಡ ಸಂಗನಬಸವೇಶ್ವರ.
--------------
ಗುರುಸಿದ್ಧದೇವರು
ಅಯ್ಯ, ಕೇಳ, ಪ್ರಮಥಗಣಂಗಳೆಲ್ಲ ಷಡ್ವಿಧಭಕ್ತಿಯೆಂಬ ಪರಮಾಮೃತವ ಸೇವಿಸಿ, ಪ್ರವೃತ್ತಿಮಾರ್ಗದಲ್ಲಿ ಚರಿಸುವ ಆರು ವೈರಿಗಳ ಸಂಗವ ತ್ಯಜಿಸಿ, ನಿವೃತ್ತಿ ಮಾರ್ಗದಲ್ಲಿ ಚರಿಸುವ ಷಡ್ಗುಣಗಳ ಸಂಗವ ಸಾಧಿಸಿ, ಜಂಗಮದ ಆಚಾರ ವಿಚಾರವ ತಿಳಿದು, ಷಟ್‍ಸ್ಥಲಮಾರ್ಗದಲ್ಲಿ ನಿಂದು, ಭಕ್ತಿ-ಜ್ಞಾನ-ವೈರಾಗ್ಯದಲ್ಲಾಚರಿಸಿದ ವಿಚಾರವೆಂತೆಂದಡೆ : ಅನಾದಿನಿರಂಜನ-ಅಕಾಯಚರಿತ್ರ-ನಿರಾಲಂಬ-ಪರಶಿವಮೂರ್ತಿ ಸಾಕ್ಷಾತ್ ಶ್ರೀಗುರುದೇವನಿಂದ ಏಕವಿಂಶತಿ ವೇಧಾ-ಮಂತ್ರ-ಕ್ರಿಯಾದೀಕ್ಷೆಯ ಪಡದು, ತನ್ನ ತಾನರ್ಚಿಸಿ, ಆ ಶ್ರೀಗುರುದೇವನ ಲಿಂಗಜಂಗಮಲೀಲೆ ಹೇಗುಂಟೋ ಹಾಂಗೆ, ಭಕ್ತಿಯ ಮಾಡಿ, ಶ್ರೀಗುರು-ಲಿಂಗ-ಜಂಗಮದಂತಃಕರಣವೆಂಬ ಪರಮಾತೃತಸುಧೆಯೊಳಗೆ ಲೋಲುಪ್ತರಾಗಿ, ನಿರಾವಯ ಸಮಾಧಿಯಲ್ಲಿ ಬಯಲಾದರು ನೋಡ. ಅದರ ವಿಚಾರವೆಂತೆಂದಡೆ : ಭಕ್ತಿಸ್ಥಲಕ್ಕೆ ಕಾರಣವಾದ ಬಸವಣ್ಣನೆ ಲಿಂಗಲಾಂಛನಗಳ ನೋಡಿ, ತನು-ಮನ-ಧನವನೊಪ್ಪಿಸಿ ಶರಣೆಂದರಯ್ಯ ! ಮಹೇಶಸ್ಥಲಕ್ಕೆ ಕಾರಣವಾದ ಮಡಿವಾಳದೇಶಿಕೇಂದ್ರನೆ ಲಿಂಗಲಾಂಛನ-ವಿಭೂತಿ-ರುದ್ರಾಕ್ಷೆ-ಪಂಚಾಚಾರವ ನೋಡಿ ತನುಮನಧನವನೊಪ್ಪಿಸಿ ಶರಣೆಂದರಯ್ಯ. ಪ್ರಸಾದಿಸ್ಥಲಕ್ಕೆ ಕಾರಣವಾದ ಮರುಳಶಂಕರದೇವನೆ ಲಿಂಗಲಾಂಛನ-ವಿಭೂತಿ-ರುದ್ರಾಕ್ಷೆ-ಮಂತ್ರ ಪಂಚಾಚಾರದಾಚರಣೆ, ಸಪ್ತಾಚಾರದ ಸಂಬಂಧದ ನಡೆನುಡಿಯ ವಿಚಾರಿಸಿ, ತನುಮನಧನವನೊಪ್ಪಿಸಿ ಶರಣೆಂದರಯ್ಯ. ಪ್ರಾಣಲಿಂಗಿಸ್ಥಲಕ್ಕೆ ಕಾರಣವಾದ ಸಿದ್ಧರಾಮೇಶ್ವರನೆ ಲಿಂಗಲಾಂಛನ, ಶ್ರೀವಿಭೂತಿ, ರುದ್ರಾಕ್ಷೆ, ಪಂಚಮಂತ್ರ, ದ್ವಾದಶಾಚಾರ ಮೊದಲಾದ ಸರ್ವಾಚಾರ ಸಂಪತ್ತಿನಾಚರಣೆ ಸರ್ವಾಂಗದಲ್ಲಿ ನೂನು ಕೂನುಗಳಿಲ್ಲದೆ, ನಡೆನುಡಿಗಳು ಹೊದ್ದಲ್ಲದೆ, ನಿರಾಭಾರಿ ವೀರಶೈವವ ನೋಡಿ ಇದೆ ಪರವಸ್ತುವೆಂದು ತನುಮನಧನವನೊಪ್ಪಿಸಿ ಶರಣೆಂದರಯ್ಯ. ಶರಣಸ್ಥಲಕ್ಕೆ ಕಾರಣವಾದ ಚೆನ್ನಬಸವೇಶ್ವರನೆ ಇಂತು ಚತುರ್ವಿಧಮೂರ್ತಿಗಳು ವಿಚಾರಿಸಿದ ಆಚರಣೆಯ ನೋಡಿ, ಗುರು-ಸೂತ್ರ-ಗೋತ್ರ-ಸಂಪ್ರದ ದೀಕ್ಷೆಯ ವಿಚಾರಿಸಿ, ಲಿಂಗಾಂಗ ಷಟ್ಸ್ಥಾನಂಗಳ ನೋಡಿ, ಗುರುಮಾರ್ಗಾಚಾರ ನಡೆನುಡಿಗಳ ವಿಚಾರಿಸಿ, ಸ್ವಾನುಭಾವ ಸಕೀಲದ ಗೊತ್ತ ತಿಳಿದು, ಲಾಂಚನವ ನೋಡಿ ಮನ್ನಿಸಿ, ತನುಮನಧನವನೊಪ್ಪಿಸಿ ಶರಣೆಂದರಯ್ಯ. ಐಕ್ಯಸ್ಥಲಕ್ಕೆ ಕಾರಣವಾದ ಅಜಗಣ್ಣಗಳೆ ಬಸವ, ಮಡಿವಾಳ, ಮರುಳುಶಂಕರ, ಸಿದ್ಧರಾಮ, ಚೆನ್ನಬಸವ ಮೊದಲಾದ ಮಹಾಗಣಂಗಳು ಅರ್ತಿ-ಉತ್ಸಾಹದಿಂದ ಭಕ್ತಿಯ ಮಾಡಿದ ಜಂಗಮವೆ ನನಗೆ ಮಹಾಪ್ರಸಾದವೆಂದು ಅವರಡಿಗಳಿಗೆ ವಂದಿಸಿ, ತನು-ಮನ-ಧನವನೊಪ್ಪಿಸಿ ಶರಣೆಂದರಯ್ಯ. ನಿರವಯಸ್ಥಲಕ್ಕೆ ಕಾರಣವಾದ ಪ್ರಭುದೇವನೆ ಆವ ಮತವೆಂದು ನೋಡದೆ, ಬಾಲಬ್ರಹ್ಮಿ-ಬಳಸಿಬ್ರಹ್ಮಿಯೆಂಬ ಸಂಸಾರ ಸಂಕಲ್ಪಸೂತಕವನೆಣಿಸದೆ, ಸರ್ವಾಂಗದವಯವಂಗಳ ನೋಡಿ, ಸರ್ವಸಂಗಪರಿತ್ಯಾಗದಿಂದ, ದ್ವಾದಶ ಮಲಂಗಳ ತ್ಯಜಿಸಿ, ಭಕ್ತಿ-ಜ್ಞಾನ-ವೈರಾಗ್ಯದಿಂದ ಸಮಸ್ತವಾದ ಭೋಗಯೋಗಾದಿಗಳಿಗೆ ಹೇವರಿಸಿ, ನಿರಾಸಕತ್ವದಿಂದ ಶಿವಧೋ ಎಂದು ಗುರೂಪಾವಸ್ತೆಯಂ ಮಾಡುವ ಜ್ಞಾನಕಲಾತ್ಮಂಗೆ ಜಂಗಮಾಕೃತಿಯಿಂದ ಪ್ರತ್ಯಕ್ಷವಾಗಿ, ಆ ಜ್ಞಾನಕಲಾತ್ಮನ ಉಪಾವಸ್ತೆಯನೊಂದಿಸಿ, ಆತಂಗೆ ಅಂಜಬೇಡವೆಂದು ಅಭಯಹಸ್ತವನಿತ್ತು. ರೇವಣಸಿದ್ಧೇಶ್ವರ ಮೊದಲಾದ ಗಣಾಚಾರ್ಯರ ಮಧ್ಯದಲ್ಲಿ ಈ ಜ್ಞಾನಕಲಾತ್ಮನನೊಪ್ಪಿಸಿ, ಅವರಿಂದ ನಿರಾಕಾರವಾದ ಪ್ರಾಣಲಿಂಗವ ಬಷ್ಕರಿಸಿ, ಪಂಚಕಲಶಸೂತ್ರದಿಂದ ಪ್ರಮಥಗಣ ಸಾಕ್ಷಿಯಾಗಿ ಆತನ ಷಡ್ವಿಧಸ್ಥಾನದಲ್ಲಿ ಸ್ಥಿರಗೊಳಸಿ, ಅಂತರಂಗ ಬಹಿರಂಗದಲ್ಲಿ ಅಷ್ಟವಿಧಾರ್ಚನೆ, ಷೋಡಶೋಪಚಾರ ಭಕ್ತಿಗಳನರುಪಿ, ಆ ಪರಶಿವಲಿಂಗದಲ್ಲಿ ನೈಷೆ*ಯ ನೋಡಿ, ಪ್ರಮಥಗಣರಾಧ್ಯ ಭಕ್ತ ಮಹೇಶ್ವರರೊಡಗೂಡಿ, ಏಕವಿಂಶತಿ ದೀಕ್ಷೆ ಮೊದಲಾಗಿ, ಪ್ರಮಥರು ನುಡಿದ ಎರಡೆಂಬತ್ತು ಕೋಟಿ ವಚನಾನುಭಾವದ ಉದಾಹರಣೆಯ ಬೋಧಿಸಿ, ಸ್ವಸ್ವರೂಪು ನಿಲುಕಡೆಯ ಬೋಧಿಸಿ, ನಾನು ನೀನು ಎಂಬ ಭಿನ್ನಭಾವವನಳಿದು, ಏಕಸ್ವರೂಪವೆಂಬ ಅಭಿನ್ನಲೀಲೆಯಿಂದ ಪಾದೋದಕ ಪ್ರಸಾದದಲ್ಲಿ ಏಕಭಾಜನವ ಮಾಡಿದಮೇಲೆ, ಶ್ರೀಗುರು ಬಸವ ಮೊದಲಾದ ಸಕಲಪ್ರಮಥಗಣಾರಾಧ್ಯರ ಕರದು, ಇಲ್ಲೊಂದು ನಿಜವಸ್ತು ಉಂಟೆಂದು ಹೇಳಿ, ತಾವು ಮೊದಲು ಶರಣು ಹೊಕ್ಕು, ತಮ್ಮ ಹಿಂದೆ ಶರಣಗಣಂಗಳೆಲ್ಲ ಶರಣುಹೊಕ್ಕು. ಅಡಿ ಮುಡಿಯಿಂದ ವಸ್ತುವ ಬೆಸಗೊಂಡು ಆ ಲಿಂಗಜಂಗಮದೇವರೂಪಡಗೂಡಿ ಬಯಲೊಳಗೆ ಮಹಾಬಯಲಾದರು ನೋಡ ಸಂಗನಬಸವೇಶ್ವರ.
--------------
ಗುರುಸಿದ್ಧದೇವರು
ಕ್ಷಮೆ ದಮೆ ಶಾಂತಿ ಸೈರಣೆ ಭಕ್ತಿ ಜ್ಞಾನ ವೈರಾಗ್ಯಸಂಪನ್ನರಾದ ವೀರಮಾಹೇಶ್ವರರು, ಜಗದ್ಧಿತಾಥಾವಾಗಿ ಮತ್ರ್ಯಲೋಕದೊಳು ಬಂದು, ನಡೆನಡೆಗೆ ನುಡಿನುಡಿಗೆ ಅಡಿಗಡಿಗೆ ಹೆಜ್ಜೆಹೆಜ್ಜೆಗೆ ಓಂ ನಮಃ ಶಿವಾಯ, ಓಂ ನಮಃ ಶಿವಾಯ, ಓಂ ನಮಃ ಶಿವಾಯ- ಎಂಬ ಮಂತ್ರಮೂರ್ತಿಗಳಾಗಿ, ಲಿಂಗದ ನೆನಹಿಂದ ಲಿಂಗಾರ್ಪಿತಕ್ಕೆ ಹೋಗಿ, ನಿಂದು ಲಿಂಗಾರ್ಪಿತ ಭಿಕ್ಷಾ ಎಂದಲ್ಲಿ, ಗುರುವಾಜ್ಞೆಯಿಂದ ಬಂದ ಭಿಕ್ಷ ಅಮೃತಾನ್ನವೆಂದು ಕೈಕೊಂಡು ಭೋಜ್ಯ ಭೋಜ್ಯಗೆ ಓಂ ನಮಃ ಶಿವಾಯ, ಓಂ ನಮಃ ಶಿವಾಯ, ಓಂ ನಮಃ ಶಿವಾಯ, ಎಂಬ ನುಡಿಯಿಂದ ಸೇವಿಸಿ, ನಿತ್ಯತೃಪ್ತರಾಗಿ, ಸುಳುಹು ಪಾವನರಾಗಿ ಚರಿಸುವ ಮಹಾಮಹಿಮ ಶರಣರ ನಡೆ ಪುರುಷ, ನುಡಿ ಪುರುಷ, ಮುಟ್ಟಿದ್ದು, ನೋಡಿ ಸೋಂಕಿದ್ದೆಲ್ಲಾ ಪಾವನ, ಹಾದ ಜಲವೆಲ್ಲ ಪುಣ್ಯತೀರ್ಥ, ಏರಿದ ಬೆಟ್ಟವೆಲ್ಲ ಶ್ರೀಪರ್ವತಂಗಳಾದವು. ಇಂತಪ್ಪ ನಿರಾಳ ನಿಜೈಕ್ಯ ನಿರಾಮಯ ನಿರ್ದೇಹಿಗಳಾದ ಶರಣರ ಅರೆಪಾದ ಧೂಮ್ರ ಮಲಿನವಾಗಿರುವಂತೆ ಮಾಡಯ್ಯ. [ಕೇಟಶ್ವರಲಿಂಗದಲ್ಲಿ] ಧನ್ಯ ನಾನಯ್ಯ.
--------------
ಬೊಕ್ಕಸದ ಚಿಕ್ಕಣ್ಣ
ವ್ಯಾಘ್ರದಿಂ ದಿವಾರಾತ್ರಿಗಳಲ್ಲಿಯು ಕಾಣಬಹಾಂಗೆ ಭೇರುಂಡನಾ ಭೂಮಿ ಆಕಾಶಂಗಳೆರಡರಲ್ಲಿಯೂ ಚರಿಸುವ ಹಾಂಗೆ ಶಿವಯೋಗಿಯಾ ಪ್ರಪಂಚ ಪರಮಾರ್ಥಂಗಳೆರಡರಲ್ಲಿಯೂ ಕಂಡು ಆಚರಿಸುವನೆಂಬುದು ತೋರಲ್ಪಡುತ್ತಿಹುದು. ಶಿವಾಚಾರ ಸಂಪನ್ನರಾಗಿ ಶಿವಯೋಗದ ಹೊಲಬನರಿದವರು ಲೌಕಿಕದತ್ತಲೂ ಚರಿಸುವರು, ಪರಮಾರ್ಥದತ್ತಲೂ ಚರಿಸುವರು, ಕಪಿಲಸಿದ್ಧಮಲ್ಲಿನಾಥನೆಂಬ ಮಹಾಬಯಲು ಕೂಡಿರ್ಪರು.
--------------
ಸಿದ್ಧರಾಮೇಶ್ವರ
ಸಚರಾಚರವೆಲ್ಲಕ್ಕೆ ಆಸೆಯೆ ಪ್ರಾಣ. ಸಚರಾಚರದ ಚತುರಾಸಿ ಬಲದೂಳಗೆ ಆಸೆಯಿಲ್ಲದೆ ಚರಿಸುವ ಲಿಂಗಾಂಗಿಯ ತೋರಾ. ``ಆಸೆಯಾ ಬದ್ಧತೇ ಲೋಕೇ ಕರ್ಮಣಾ ಬಹು ಬಂತಯಾ ಆಯು ಕ್ಷೀಣನ ಜಾನಾತಿ ಮೇಣುಸೂತ್ರ ವಿಧೀಯತೇ ಎಂದುದಾಗಿ, ಆಸೆಯನೆ ಧಿಕ್ಕರಿಸಿ ನಿರಾಸೆಯಲಿ ನಡೆವವರ ಸರಿಯೆಂಬೆ ಕಾಣಾ, ನಿವೃತ್ತಿ ಸಂಗಯ್ಯ. || 3 ||
--------------
ನಿವೃತ್ತಿ ಸಂಗಯ್ಯ
ಇನ್ನಷ್ಟು ... -->