ಅಥವಾ

ಒಟ್ಟು 31 ಕಡೆಗಳಲ್ಲಿ , 14 ವಚನಕಾರರು , 26 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕಾಯದ ಕೈಯಲ್ಲಿಪ್ಪುದು ರೂಪುವಿಡಿದ ಲಿಂಗ. ಮನದ ಕೊನೆಯಲ್ಲಿಪ್ಪುದು ಸಾಕಾರವಿರಹಿತಲಿಂಗ. ಅರಿವಿನ ಭೇದಂಗಳ ತಿಳಿದು ನೋಡಿ, ಕಂಡೆಹೆನೆಂಬ ಸನ್ಮತ ಸದ್ಭಾವಿಗಳು ಕೇಳಿರೊ. ಅದು ಚಿದ್ಘನ ಚಿದಾದಿತ್ಯ ಚಿತ್ಸ್ವರೂಪ ಸದಮಲಾನಂದ ಗೂಡಿನ ಗುಮ್ಮಟನಾಥನೊಡೆಯ ಅಗಮ್ಯೇಶ್ವರಲಿಂಗ. ಇದಾರಿಗೂ ಅಪ್ರಮಾಣಮೂರ್ತಿ.
--------------
ಮನುಮುನಿ ಗುಮ್ಮಟದೇವ
ಅಯ್ಯಾ, ಪರಾತ್ಪರ ಸತ್ಯ ಸದಾಚಾರ ಗುರುಲಿಂಗಜಂಗಮದ ಶ್ರೀಚರಣವನು ಹಿಂದೆ ಹೇಳಿದ ಅಚ್ಚಪ್ರಸಾದಿಯೋಪಾದಿಯಲ್ಲಿ ನಿರ್ವಂಚಕತ್ವದಿಂದ ಗುರುಲಿಂಗಜಂಗಮಕ್ಕೆ ಅರ್ಥಪ್ರಾಣಾಭಿಮಾನವ ಸಮರ್ಪಿಸಿ, ಒಪ್ಪತ್ತು ಅಷ್ಟವಿಧಾರ್ಚನೆ ಷೋಡಶೋಪಚಾರದಿಂದ ಅರ್ಚನೆಯ ಮಾಡಿ, ಆ ಚರಣೋದಕ ಪ್ರಸಾದವನು ತನ್ನ ಸರ್ವಾಂಗದಲ್ಲಿ ನೆಲೆಸಿರ್ಪ ಇಷ್ಟ ಮಹಾಲಿಂಗದೇವಂಗೆ ಕೊಟ್ಟು ಕೊಂಬುವಂತಹದೆ ಇದಿರಿಟ್ಟು ಜಂಗಮ ಪಾದೋದಕ ಪ್ರಸಾದವ ಕೊಂಬ ಆಚರಣೆಯ ನಿಲುಗಡೆ ನೋಡಾ. ಆಮೇಲೆ ಒಪ್ಪತ್ತು ಸಂಬಂಧವಿಟ್ಟು ಆಚರಿಸುವ ನಿಲುಕಡೆ ಎಂತೆಂದಡೆ: ಅಯ್ಯಾ, ನಿನ್ನ ಷಟ್‍ಸ್ಥಾನದಲ್ಲಿ ನೆಲೆಸಿರ್ಪ ಇಷ್ಟಮಹಾಲಿಂಗದೇವನ ತ್ರಿವಿಧಸ್ಥಾನದಲ್ಲಿ ಓಂ ಬಸವಣ್ಣ ಚೆನ್ನಬಸವಣ್ಣ ಅಲ್ಲಮಪ್ರಭುವೆಂಬ ತ್ರಿವಿಧ ನಾಮಸ್ವರೂಪವಾದ ಷೋಡಶಾಕ್ಷರಂಗಳೆ ಷೋಡಶವರ್ಣವಾಗಿ ನೆಲೆಸಿಪ್ಪರು ನೋಡಾ. ಇಂತು ಷೋಡಶಕಳಾಸ್ವರೂಪವಾದ ಚಿದ್ಘನ ಮಹಾಲಿಂಗದೇವನ ನಿರಂಜನ ಜಂಗಮದೋಪಾದಿಯಲ್ಲಿ ಸಗುಣ ನಿರ್ಗುಣ ಪೂಜೆಗಳ ಮಾಡಿ ಜಂಗಮಚರಣಸೋಂಕಿನಿಂ ಬಂದ ಗುರುಪಾದೋದಕವಾದಡೂ ಸರಿಯೆ, ಅದು ದೊರೆಯದಿದ್ದಡೆ, ಲಿಂಗಾಣತಿಯಿಂ ಬಂದೊದಗಿದ ಪರಿಣಾಮೋದಕವಾದಡೂ ಸರಿಯೆ, ಒಂದು ಭಾಜನದಲ್ಲಿ ಸೂಕ್ಷ್ಮದಿಂ ರಚಿಸಿ ಆ ಉದಕದೊಳಗೆ ಹಸ್ತೋದಕ ಮಂತ್ರೋದಕ ಭಸ್ಮೋದಕವ ಮಾಡಿ, ಆ ಮೇಲೆ ಅನಾದಿ ಮೂಲಪ್ರಣವ ಪ್ರಸಾದಪ್ರಣವದೊಳಗೆ ಅಖಂಡಜ್ಯೋತಿಪ್ರಣವ, ಅಖಂಡಮಹಾಜ್ಯೋತಿಪ್ರಣವವ ಲಿಖಿತವಮಾಡಿ, ಶುದ್ಧಾದಿಯಾದ ಪೂರ್ಣಭಕ್ತಿಯಿಂದ ಮಹಾಚಿದ್ಘನತೀರ್ಥವೆಂದು ಭಾವಿಸಿ ಪಂಚಾಕ್ಷರ ಷಡಕ್ಷರ ಮಂತ್ರಧ್ಯಾನದಿಂದ ಅನಿಮಿಷದೃಷ್ಟಿಯಿಂ ನಿರೀಕ್ಷಿಸಿ, ಮೂರು ವೇಳೆ ಪ್ರದಕ್ಷಿಣವ ಮಾಡಿ, ಆ ಚಿದ್ಘನ ತೀರ್ಥವನು ದ್ವಾದಶದಳ ಕಮಲದ ಮಧ್ಯದಲ್ಲಿ ನೆಲೆಸಿರ್ಪ ಇಷ್ಟ ಮಹಾಲಿಂಗ ಜಂಗಮಕ್ಕೆ ಅಷ್ಟವಿಧಮಂತ್ರ ಸಕೀಲಂಗಳಿಂದ ಆಚಾರಾದಿ ಶೂನ್ಯಾಂತವಾದ ಅಷ್ಟವಿಧ ಲಿಂಗಧ್ಯಾನದಿಂದ ಅಷ್ಟವಿಧ ಬಿಂದುಗಳ ಸಮರ್ಪಿಸಿದಲ್ಲಿಗೆ ಅಷ್ಟವಿಧೋದಕವಾಗುವುದಯ್ಯಾ. ಆ ಇಷ್ಟಮಹಾಲಿಂಗ ಜಂಗಮವೆತ್ತಿ ಅಷ್ಟಾದಶಮಂತ್ರ ಸ್ಮರಣೆಯಿಂದ ಮುಗಿದಲ್ಲಿಗೆ ನವಮೋದಕವಾಗುವುದಯ್ಯಾ. ಉಳಿದೋದಕವ ತ್ರಿವಿಧ ಪ್ರಣವಧ್ಯಾನದಿಂದ ಮುಕ್ತಾಯವ ಮಾಡಿದಲ್ಲಿಗೆ ದಶವಿಧೋದಕವೆನಿಸುವುದಯ್ಯಾ. ಹೀಗೆ ಮಹಾಜ್ಞಾನ ಲಿಂಗಜಂಗಮಸ್ವರೂಪ ಪಾದತೀರ್ಥ ಮುಗಿದ ಮೇಲೆ ತಟ್ಟೆ ಬಟ್ಟಲಲ್ಲಿ ಎಡೆಮಾಡಬೇಕಾದಡೆ ಗೃಹದಲ್ಲಿರ್ದ ಕ್ರಿಯಾಶಕ್ತಿಯರಿಗೆ ಧಾರಣವಿರ್ದಡೆ ತಾ ಸಲಿಸಿದ ಪಾದೋದಕ ಪ್ರಸಾದವ ಕೊಡುವುದಯ್ಯಾ. ಸಹಜಲಿಂಗಭಕ್ತರಾದಡೆ ಮುಖ ಮಜ್ಜನವ ಮಾಡಿಸಿ ತಾ ಧರಿಸುವ ವಿಭೂತಿಧಾರಣವ ಮಾಡಿಸಿ ಶಿವಶಿವಾ ಹರಹರ ಬಸವಲಿಂಗಾ ಎಂದು ಬೋಧಿಸಿ ಎಡೆಮಾಡಿಸಿಕೊಂಬುವುದಯ್ಯಾ. ಆಮೇಲೆ ತಾನು ಸ್ಥಲವಾದಡೆ ಸಂಬಂಧಪಟ್ಟು, ಪರಸ್ಥಲವಾದಡೆ ಚಿದ್ಘನ ಇಷ್ಟಮಹಾಲಿಂಗ ಜಂಗಮವ ವಾಮಕರಸ್ಥಲದಲ್ಲಿ ಮೂರ್ತಮಾಡಿಸಿಕೊಂಡು ದಕ್ಷಿಣಹಸ್ತದಲ್ಲಿ ಗುರುಲಿಂಗಜಂಗಮ ಸೂತ್ರವಿಡಿದು ಬಂದ ಕ್ರಿಯಾಭಸಿತವ ಲೇಪಿಸಿ, ಮೂಲಪ್ರಣವ ಪ್ರಸಾದಪ್ರಣವದೊಳಗೆ ಗೋಳಕಪ್ರಣವ ಅಖಂಡಗೋಳಕಪ್ರಣವ ಅಖಂಡ ಮಹಾಗೋಳಕಪ್ರಣವ, ಜ್ಯೋತಿಪ್ರಣವ ಧ್ಯಾನದಿಂದ ದ್ವಾದಶ ಮಣಿಯ ಧ್ಯಾನಿಸಿ ಪ್ರದಕ್ಷಿಸಿ, ಮೂಲಮೂರ್ತಿ ಲಿಂಗಜಂಗಮದ ಮಸ್ತಕದ ಮೇಲೆ ಸ್ಪರ್ಶನವ ಮಾಡಿ, ಬಟ್ಟಲಿಗೆ ಮೂರು ವೇಳೆ ಸ್ಪರ್ಶನವ ಮಾಡಿ, ಪದಾರ್ಥದ ಪೂರ್ವಾಶ್ರಯವ ಕಳೆದು ಶುದ್ಧಪ್ರಸಾದವೆಂದು ಭಾವಿಸಿ, ಆ ಇಷ್ಟ ಮಹಾಲಿಂಗ ಜಂಗಮಕ್ಕೆ ಅಷ್ಟಾದಶ ಮಂತ್ರಸ್ಮರಣೆಯಿಂದ ಮೂರುವೇಳೆ ರೂಪ ಸಮರ್ಪಿಸಿ, ಎರಡು ವೇಳೆ ರೂಪ ತೋರಿ, ಚಿರಪ್ರಾಣಲಿಂಗ ಮಂತ್ರ ಜಿಹ್ವೆಯಲ್ಲಿಟ್ಟು ಆರನೆಯ ವೇಳೆಗೆ ಭೋಜ್ಯಗಟ್ಟಿ ಆ ಇಷ್ಟಮಹಾಲಿಂಗ ಮಂತ್ರಧ್ಯಾನದಿಂದ ಸಮರ್ಪಿಸಿ, ಷಡ್ವಿಧ ಲಿಂಗಲೋಲುಪ್ತಿಯಿಂದ ಸಂತೃಪ್ತನಾಗಿ ಆಚರಿಸಿದಾತನೆ ಗುರುಭಕ್ತನಾದ ನಿಚ್ಚಪ್ರಸಾದಿಯೆಂಬೆ ಕಾಣಾ ಚೆನ್ನಮಲ್ಲಿಕಾರ್ಜುನಾ
--------------
ಅಕ್ಕಮಹಾದೇವಿ
ಆ ಇಷ್ಟಮಹಾಲಿಂಗವೆ ಅನಾದಿಶರಣನ ಆಧಾರಚಕ್ರದಲ್ಲಿ ನಕಾರಮಂತ್ರಮೂರ್ತಿಯಾಗಿ ನೆಲಸಿರ್ಪುದು ನೋಡ! ಆ ಮಹಾಲಿಂಗವೆ ಸ್ವಾದ್ಥಿಷ್ಠಾನಚಕ್ರದಲ್ಲಿ ಮಕಾರಮಂತ್ರಮೂರ್ತಿಯಾಗಿ ನೆಲಸಿರ್ಪುದು ನೋಡ! ಆ ಮಹಾಲಿಂಗವೆ ಮಣಿಪೂರಕಚಕ್ರದಲ್ಲಿ ಶಿಕಾರಮಂತ್ರಮೂರ್ತಿಯಾಗಿ ನೆಲಸಿರ್ಪುದು ನೋಡ! ಅನಾಹತಚಕ್ರದಲ್ಲಿ ವಕಾರಮಂತ್ರಮೂರ್ತಿಯಾಗಿ ನೆಲಸಿರ್ಪುದು ನೋಡ! ವಿಶುದ್ಧಿಚಕ್ರದಲ್ಲಿ ಯಕಾರಮಂತ್ರಮೂರ್ತಿಯಾಗಿ ನೆಲಸಿರ್ಪುದು ನೋಡ! ಆಜ್ಞಾಚಕ್ರದಲ್ಲಿ ಓಂಕಾರಮಂತ್ರಮೂರ್ತಿಯಾಗಿ ನೆಲಸಿರ್ಪುರು ನೋಡ! ಬ್ರಹ್ಮರಂಧ್ರದಲ್ಲಿ ಬಕಾರಮಂತ್ರಮೂರ್ತಿಯಾಗಿ ನೆಲಸಿರ್ಪುದು ನೋಡ! ಶಿಖಾಚಕ್ರದಲ್ಲಿ ಕ್ಷಕಾರಮಂತ್ರಮೂರ್ತಿಯಾಗಿ ನೆಲಸಿರ್ಪುದು ನೋಡ! ಪಶ್ಚಿಮಚಕ್ರದಲ್ಲಿ ವ್ಯಂಜನ ಹಕಾರಮಂತ್ರಮೂರ್ತಿಯಾಗಿ ನೆಲಸಿರ್ಪುದು ನೋಡ! ಈ ಪ್ರಕಾರದಿಂದ ಅನಾದಿಶರಣನ ಸರ್ವಾಂಗದಲ್ಲಿ ಕಿಷ್ಕಿಂದಮಯವಾಗಿ ತುಂಬಿಕೊಂಡಿರ್ಪುದು. ಇಂತಪ್ಪ ಪರಂಜ್ಯೋತಿ ಚಿದ್ಘನ ಮಹಾಲಿಂಗ ಪ್ರಮಾಣಿಸಿ ನೋಡೆನೆಂದವರಿಗೆ ಅತ್ಯತಿಷ್ಠದ್ದಶಾಂಗುಲವಾಗಿರ್ಪುದು ನೋಡ ಸಂಗನಬಸವೇಶ್ವರ.
--------------
ಗುರುಸಿದ್ಧದೇವರು
ಧ್ಯಾನ ಧಾರಣ ಸಮಾದ್ಥಿಯೆಂಬೀ ಮೂರು, ಕರ್ಮಕಾಂಡ. ಚಿಚ್ಛಕ್ತಿ ಚಿದ್ಘನ ಸುಶಕ್ತಿ ಚಿದಾದಿತ್ಯಸಂಪದ ತ್ರಿವಿಧಭೇದ, ಜ್ಞಾನಕಾಂಡ. ಇಂತೀ ಭಾವ, ನಿಜವ ನೆಮ್ಮಿ ಕುರುಹುದೋರದೆ, ಭಾವ ನಿರ್ಭಾವವಾಗಿ ನಿಂದುದು ಪ್ರಾಣಲಿಂಗಸಂಬಂಧ, ಸಗರದ ಬೊಮ್ಮನೊಡೆಯ ತನುಮನ ಸಂಗಮೇಶ್ವರಾ.
--------------
ಸಗರದ ಬೊಮ್ಮಣ್ಣ
ಇಂತೀ ಅಷ್ಟಾವರಣವ ಸದ್ಗುರುಮುಖದಿಂ ಚಿದಂಗಚಿದ್ಘನಲಿಂಗದ ಮಧ್ಯದಲ್ಲಿ ಸಂಬಂಧವಿಟ್ಟು, ಏಕಲಿಂಗನಿಷ್ಠಾಪರತ್ವದಿಂದ ಸ್ಥೂಲಕಂಥೆಯ ಧರಿಸಿ ಸತ್ಕಾಯಕ-ಸತ್ಕ್ರಿಯಾ-ಸಮ್ಯಜ್ಞಾನ-ಸದ್ಭಕ್ತಿ- ಸದಾಚಾರಸನ್ನಿಹಿತರೆ ನೂತನಗಣಂಗಳೆನಿಸುವರು ನೋಡ. ಅದರಿಂ ಮೇಲೆ ಚಿದಂಗ-ಚಿತ್ಪ್ರಾಣಾಂಗದ ಮಧ್ಯದಲ್ಲಿ ಚಿದ್ಘನಲಿಂಗ-ಚಿತ್ಪ್ರಾಣಲಿಂಗವ ಸದ್ಗುರುಮುಖದಿಂ ಸಂಬಂಧವಿಟ್ಟು ಆ ಲಿಂಗದ ಮಧ್ಯದಲ್ಲಿ ಸಾಕಾರ-ನಿರಾಕಾರವಾದ ಷೋಡಶಾವರಣವ ಸಂಪೂರ್ಣವಮಾಡಿಕೊಂಡು, ಸೂಕ್ಷ್ಮತನುವೆಂಬ ಕಂಥೆಯ ಧರಿಸಿ ಕಂಗಳಾಲಯದ ಜ್ಯೋತಿರ್ಲಿಂಗದ ಮಧ್ಯದಲ್ಲಿ ಮನವ ಮುಳುಗಿಸುವರೆ ಆದಿಗಣಂಗಳೆನಿಸುವರು ನೋಡ. ಅದರಿಂ ಮೇಲೆ, ಚಿದ್ಘನ ತ್ರಿವಿಧಾಂಗ-ಚಿದ್ಘನ ತ್ರಿವಿಧಲಿಂಗವ ಸದ್ಗುರುಮುಖದಿಂ ಸಂಬಂದ್ಥಿಸಿಕೊಂಡು ಆ ಲಿಂಗಾಂಗದ ಮಧ್ಯದಲ್ಲಿ ಕ್ರಿಯಾಷ್ಟಾವರಣ-ಜ್ಞಾನಾಷ್ಟಾವರಣ-ಮಹಾಜ್ಞಾನಾಷ್ಟಾವರಣವ ಸಂಬಂಧವಿಟ್ಟು, ಕಾರಣತನುವೆಂಬ ಕಂಥೆಯ ಧರಿಸಿ, ಹೃತ್ಕಮಲಮಧ್ಯದಲ್ಲಿ ಬೆಳಗುವ ಪರಂಜ್ಯೋತಿರ್ಲಿಂಗಮಧ್ಯದಲ್ಲಿ ಭಾವವ ಮುಳುಗಿಸಿ ಬಚ್ಚಬರಿಯಾನಂದದಲ್ಲಿ ಪರಿಪೂರ್ಣಾನಂದದಿಂದಾಚರಿಸುವರೆ ಅನಾದಿಗಣಂಗಳೆನಿಸುವರು ನೋಡ. ಅದರಿಂ ಮೇಲೆ, ಚಿದ್ಘನ ಅಷ್ಟಾಂಗದ ಮಧ್ಯದಲ್ಲಿ ಚಿದ್ಘನ ಅಷ್ಟಲಿಂಗಂಗಳ ಸದ್ಗುರುಮುಖದಿಂ ಧರಿಸಿ, ಆ ಲಿಂಗಾಂಗದ ಮಧ್ಯದಲ್ಲಿ ಅರುವತ್ತುನಾಲ್ಕು ತೆರದಾವರಣವ ಸಂಬಂದ್ಥಿಸಿಕೊಂಡು ತಮ್ಮ ಸರ್ವಾಂಗದಲ್ಲಿ ಅಷ್ಟವಿಧಕಮಲಂಗಳ ಕಂಡು, ಆ ಕಮಲಮಧ್ಯದಲ್ಲಿ ನೆಲಸಿರ್ಪ ಚತುರ್ವಿಧ ಬಿಂದುಲಿಂಗ, ಷಡ್ವಿಧ ಧಾತುಲಿಂಗ, ದಶವಿಧ ಕ್ಷೇತ್ರಲಿಂಗ, ದ್ವಾದಶ ವಿಕೃತಿಲಿಂಗ, ಷೋಡಶ ಕಳಾಲಿಂಗ, ದ್ವಿವಿಧ ವಿದ್ಯಾಲಿಂಗ, ಸಹಸ್ರ ಶಿವಕಳಾಲಿಂಗ, ತ್ರಿವಿಧ ವಿವೇಕಲಿಂಗ ಇಂತೀ ಅಷ್ಟವಿಧಕಮಲಂಗಳ ಮಧ್ಯದಲ್ಲಿ ನೆಲಸಿರ್ಪ ಅಷ್ಟವಿಧಲಿಂಗಗಳ ಅಷ್ಟವಿಧ ಹಸ್ತಗಳಿಂದ, ಅಷ್ಟವಿಧಾರ್ಚನೆ, ಷೋಡಶೋಪಚಾರಂಗಳ ಮಾಡಿ, ಎರಡಳಿದು ಏಕರೂಪವಾಗಿ ನಿರಾವಯ ಕಂಥೆಯ ಧರಿಸಿ, ಪರತತ್ವ ಜ್ಯೋತಿರ್ಮಯಲಿಂಗದೊಳಗೆ ಉರಿಯುಂಡ ಕರ್ಪುರದಂತೆ ಸಮರಸವಾದರು ನೋಡ. ಅವರಾರೆಂದಡೆ : ರುದ್ರಲೋಕದ ರುದ್ರಗಣಂಗಳು, ಶಿವಲೋಕದ ಶಿವಗಣಂಗಳು, ದೇವಲೋಕದ ದೇವಗಣಂಗಳು, ನಾಗಲೋಕದ ನಾಗಗಣಂಗಳು, ಶಾಂಭವಲೋಕದ ಶಾಂಭವಗಣಂಗಳು ಮುಂತಾದವರು ಬಯಲೊಳಗೆ ಮಹಾಬಯಲು ಬೆರದಂತಾದರು ನೋಡ. ಇಂತೀ ಸರ್ವಾಚಾರಸಂಪತ್ತಿನಾಚರಣೆಯನಾಚರಿಸುವರೆ ನಿರಾವಯಗಣಂಗಳೆನಿಸುವರು ನೋಡ, ಸಂಗನಬಸವೇಶ್ವರ.
--------------
ಗುರುಸಿದ್ಧದೇವರು
ನಿಃಕಲನ ಸಂಗದಿಂದ ಝೇಂಕಾರನಾದನಯ್ಯ. ಝೇಂಕಾರನ ಸಂಗದಿಂದ ನಿರಂಜನನಾದನಯ್ಯ. ನಿರಂಜನನ ಸಂಗದಿಂದ ಸ್ವಯಜ್ಞಾನಿಯಾದನಯ್ಯ. ಸ್ವಯಜ್ಞಾನಿಯ ಸಂಗದಿಂದ ಪರಮಜ್ಞಾನಿಯಾದನಯ್ಯ. ಪರಮಜ್ಞಾನಿಯ ಸಂಗದಿಂದ ಮಹಾಜ್ಞಾನಿಯಾದನಯ್ಯ. ಮಹಾಜ್ಞಾನಿಯ ಸಂಗದಿಂದ ಸುಜ್ಞಾನಿಯಾದನಯ್ಯ. ಸುಜ್ಞಾನಿಯ ಸಂಗದಿಂದ ಮನಜ್ಞಾನಿಯಾದನಯ್ಯ. ಮನಜ್ಞಾನಿಯ ಸಂಗದಿಂದ ನಿರ್ಮಲಜ್ಞಾನಿಯಾದನಯ್ಯ. ನಿರ್ಮಲಜ್ಞಾನಿಯ ಸಂಗದಿಂದ ಬದ್ಧಜ್ಞಾನಿಯಾದನಯ್ಯ. ಬದ್ಧಜ್ಞಾನಿಯ ಸಂಗದಿಂದ ಶುದ್ಧಜ್ಞಾನಿಯಾದನಯ್ಯ. ಶುದ್ಧಜ್ಞಾನಿಯೇ ಭಕ್ತ, ಬದ್ಧಜ್ಞಾನಿಯೇ ಮಹೇಶ್ವರ, ನಿರ್ಮಲಜ್ಞಾನಿಯೇ ಪ್ರಸಾದಿ, ಮನಜ್ಞಾನಿಯೇ ಪ್ರಾಣಲಿಂಗಿ, ಸುಜ್ಞಾನಿಯೇ ಶರಣ, ಪರಮಜ್ಞಾನಿಯೇ ಐಕ್ಯ, ಮಹಾಜ್ಞಾನಿಯೇ ಪರಬ್ರಹ್ಮ, ಸ್ವಯಜ್ಞಾನಿಯೇ ಚಿದ್ಘನ, ನಿರಂಜನವೇ ಚಿನ್ಮಯ, ಝೇಂಕಾರವೇ ಅಣುಮಯ, ನಿಃಕಲವೇ ತಾನು ತಾನೆ ನೋಡಾ ಝೇಂಕಾರ ನಿಜಲಿಂಗಪ್ರಭುವೆ.
--------------
ಜಕ್ಕಣಯ್ಯ
ಅಯ್ಯಾ, ನಾವು ಗುರು ಲಿಂಗ ಜಂಗಮದ ಪಾದೋದಕ ಪ್ರಸಾದಸಂಬಂದ್ಥಿಗಳೆಂದು ನುಡಿದುಕೊಂಬ ಪಾತಕರ ಮುಖವ ನೋಡಲಾಗದು. ಅದೇಕೆಂದಡೆ, ಪಾದೋದಕವ ಕೊಂಡ ಬಳಿಕ, ಜನನದ ಬೇರ ಕಿತ್ತೊರಸಬೇಕು. ಪ್ರಸಾದವ ಕೊಂಡ ಬಳಿಕ, ಪ್ರಳಯವ ಗೆಲಿಯಬೇಕು. ಇಂತಪ್ಪ ಚಿದ್ರಸ ಪಾದೋದಕ ಚಿತ್‍ಪ್ರಕಾಶ ಪ್ರಸಾದ. ತನ್ನ ಚಿನ್ಮನಸ್ವರೂಪವಾದ ಹೃದಯಮಂದಿರ ಮಧ್ಯದಲ್ಲಿ ನೆಲಸಿರುವ ಸಕೀಲಸಂಬಂಧವ ಚಿದ್ಘನ ಗುರುವಿನ ಮುಖದಿಂದ ಸಂಬಂದ್ಥಿಸಿಕೊಳಲರಿಯದೆ, ಅರ್ಥದಾಸೆಗಾಗಿ ಬಡ್ಡಿಯ ತೆಗೆದುಕೊಂಡು, ಬಡವರ ಬಂಧನಕಿಕ್ಕಿ, ತುಡುಗುವ್ಯಾಪಾರವ ಮಾಡಿ, ಸದಾಚಾರದಿಂದ ಆಚರಿಸಲರಿಯದೆ, ತನುಮನಧನದಲ್ಲಿ ವಂಚನೆಯಿಲ್ಲದ ಭಕ್ತಿಯನರಿಯದೆ, ತೀರ್ಥಪ್ರಸಾದದಲ್ಲಿ ನಂಬುಗೆ ವಿಶ್ವಾಸವಿಲ್ಲದೆ ಕಂಡವರ ಕೈಯೊಡ್ಡಿ ಇಕ್ಕಿಸಿಕೊಂಡು ವಿಶ್ವಾಸವಿಲ್ಲದವಂಗೆ ಅಷ್ಟಾವರಣವೆಂತು ಸಿದ್ಧಿಯಹುದೋ? ಅದೇನು ಕಾರಣವೆಂದಡೆ : ಸಕಲ ವೇದಾಗಮ ಪುರಾಣ ಸಪ್ತಕೋಟಿ ಮಹಾಮಂತ್ರ ಉಪಮಂತ್ರ ಕೋಟ್ಯಾನುಕೋಟಿಗೆ ಮಾತೃಸ್ಥಾನವಾದ ಪಂಚಾಕ್ಷರಿಯ ಮಂತ್ರ ಸಟೆಯಾಯಿತ್ತು. ಅನಂತಕೋಟಿ ಬ್ರಹ್ಮಾಂಡಗಳನೊಳಗೊಂಡಂಥ ಗುರುಕೊಟ್ಟ ಇಷ್ಟಲಿಂಗ ಸಟೆಯಾಯಿತ್ತು. ದೇಗುಲದೊಳಗಣ ಕಲ್ಲು ಕಂಚು ಕಟ್ಟಿಗೆ ಬೆಳ್ಳಿ ತಾಮ್ರ ಬಂಗಾರದ ದೇವರ ಪೂಜಿಸುವ ಪೂಜಾರಿಗಳ ಮಾತು ದಿಟವಾಗಿತ್ತು. ಆದಿ ಅನಾದಿಯಿಂದತ್ತತ್ತಲಾಗಿ ಮೀರಿ ತೋರುವ ಮಾಯಾಕೋಳಾಹಳ ನಿರಂಜನಜಂಗಮದ ಪಾದೋದಕ ಪ್ರಸಾದ ಸಟೆಯಾಯಿತ್ತು. ಕ್ಷೇತ್ರಾದಿಗಳ ತೀರ್ಥಪ್ರಸಾದ ದಿಟವಾಯಿತ್ತು. ಅಂತಪ್ಪ ಅಗಮ್ಯ ಅಗೋಚರವಾದ ಅಷ್ಟಾವರಣ ಇಂಥವರಿಗೆಂತು ಸಾಧ್ಯವಹುದು? ಆಗದೆಂದಾತ ನಮ್ಮ ಶರಣ ಕಲಿದೇವರದೇವ
--------------
ಮಡಿವಾಳ ಮಾಚಿದೇವ
ನಿಜ ಬೋಳಿಂಗೆ ಲೋಚು ಮಾಡಲೇತಕ್ಕೆ? ಚಿದ್ಘನ ಬೋಳಿಂಗೆ ವೈಭವದ ಮದನನ ಶೃಂಗಾರದ ಹಾರವೇತಕ್ಕೆ? ಸಕಲಸುಖ ಬೋಳಿಂಗೆ ಅಖಿಳ ಸುಖಗೋಷಿ* ಏತಕ್ಕೆ? ಸರ್ವಸಂಗಪರಿತ್ಯಾಗ ನಿರ್ಮಲ ಪರಮನಿರ್ವಾಣಿಗೆ ತ್ರಿಬಂಧದಲ್ಲಿ ಸಿಲುಕಿ ಕಂಡವರಿಗೆ ಕಾರ್ಪಣ್ಯಬಡಲೇತಕ್ಕೆ? ಇಂತೀ ಗುಣದಲ್ಲಿ ತಾವು ತಾವು ಬಂದುದನರಿಯದೆ ತಮಗೆ ವಂದಿಸಿ ನಿಂದಿಸುವರಂಗವನರಿಯದೆ ಮತ್ತೆ ಲಿಂಗಾಂಗಿಗಳೆಂದು ನುಡಿವ ಜಗ ಸರ್ವಾಂಗ ಭಂಡರ ಕಂಡು ನುಡಿದಡೆ ಸಮಯಕ್ಕೆ ಹಾನಿ. ಸುಮ್ಮನಿದ್ದಡೆ ಜ್ಞಾನಕ್ಕೆ ಭಂಗ. ಉಭಯವನೂ ಪ್ರತಿಪಾದಿಸದಿದ್ದಡೆ, ತನ್ನಯ ಭಕ್ತಿಗೆ ಇದಿರೆಡೆಗೇಡು. ಇದು ಚುನ್ನವಲ್ಲ, ಎನ್ನಯ ಕೇಡು. ಈ ಗುಣ ಚೆನ್ನಬಸವಣ್ಣಪ್ರಿಯ ಕಮಳೇಶ್ವಲಿಂಗ ಸಾಕ್ಷಿಯಾಗಿ.
--------------
ಶ್ರೀಗುರು ಪ್ರಭುನ್ಮುನೀಶ್ವರ
ಅಯ್ಯ, ಗುರುಕರಜಾತನಾಗಿ ಪ್ರಮಥರಾಚರಿಸಿದ ಸನ್ಮಾರ್ಗದಲ್ಲಾಚರಿಸಿ, ಮಹಾಲಿಂಗೈಕ್ಯಾನುಭಾವಿಯಾದ ಮೇಲೆ ಆಯುಃ ಕರ್ಮ [ಚ] ವಿತ್ತಂ ಚ ಎಂದು ಇದಕ್ಕಂಜಿ ಉಮ್ಮಳಿಸುವ ಮಾಯಾಪ್ರಸೂತಿ ಮನವ ನೋಡ. ಆಯುಷ್ಯವೆ ಚಿದ್ಘನಮಹಾಲಿಂಗ, ಶ್ರೀಯೆ ಚಿದ್ಘನಮಹಾಜಂಗಮ, ನಿಧಿನಿಧಾನವೆ ಚಿದ್ಘನ ಮಹಾಪ್ರಮಥಗನ ಶರಣರ ಭೃತ್ಯಭಕ್ತಿ ವಿದ್ಯವೆ ಪಂಚಾಕ್ಷರ-ಷಡಾಕ್ಷರ ಮೊದಲಾದ ಮಹಾಶಿವಯಂತ್ರ. ದೇಹವೆ ಗುರುಚರಪರಕ್ಕೆ ಅಷ್ಟವಿಧಾರ್ಚನೆ-ಷೋಡಶೋಪಚಾರವಾಗಲೆಂದು ಶ್ರೀಗುರುಬಸವಲಿಂಗ ಬರದನಾಗಿ ಹೊಟ್ಟೆಯ ಶಿಶುವಿಂಗೆ ಬೇರೆ ನೈವೇದ್ಯವುಂಟೇನೋ? ಶಾಂತಚಿದ್ಘನಮಹಾಲಿಂಗದಲ್ಲಿ ಸಂತೃಪ್ತನಾದ ಅಯೋನಿಸಂಭವ ನಿಜಶರಣ ನಿತ್ಯಮುಕ್ತಂಗೆ ನೋಡ ಸಂಗನಬಸವೇಶ್ವರ.
--------------
ಗುರುಸಿದ್ಧದೇವರು
ಅಯ್ಯ, ನಿನ್ನ ಷಟ್ಚಕ್ರಂಗಳಲ್ಲಿ ಅನಾದಿ ನಿಷ್ಕಳಂಕ ಚಿದ್ಘನ ಇಷ್ಟಮಹಾಲಿಂಗವೆ ಷಡ್ವಿಧಲಿಂಗವಾಗಿ ನೆಲಸಿರ್ಪರು ನೋಡ, ಅದೆಂತೆಂದಡೆ: ಆಧಾರಚಕ್ರದ ನಾಲ್ಕೆಸಳಮಧ್ಯದಲ್ಲಿ ನಕಾರಮಂತ್ರಮೂರ್ತಿ ಆಚಾರಲಿಂಗವಾಗಿ ನೆಲಸಿರ್ಪರು ನೋಡ. ಸ್ವಾಧಿಷಾ*ನಚಕ್ರದ ಆರೆಸಳಮಧ್ಯದಲ್ಲಿ ಮಕಾರಮಂತ್ರಮೂರ್ತಿ ಗುರುಲಿಂಗವಾಗಿ ನೆಲಸಿರ್ಪರು ನೋಡ. ಮಣಿಪೂರಕಚಕ್ರದ ಹತ್ತೇಸಳಮಧ್ಯದಲ್ಲಿ ಶಿಕಾರಮಂತ್ರಮೂರ್ತಿ ಶಿವಲಿಂಗವಾಗಿ ನೆಲಸಿರ್ಪರು ನೋಡ. ಅನಾಹತಚಕ್ರದ ಹನ್ನೆರಡೆಸಳಮಧ್ಯದಲ್ಲಿ ವಕಾರಮಂತ್ರಮೂರ್ತಿ ಚರಲಿಂಗವಾಗಿ ನೆಲಸಿರ್ಪರು ನೋಡ. ವಿಶುದ್ಧಿಚಕ್ರದ ಹದಿನಾರೆಸಳಮಧ್ಯದಲ್ಲಿ ಯಕಾರಮಂತ್ರಮೂರ್ತಿ ಪ್ರಸಾದಲಿಂಗವಾಗಿ ನೆಲಸಿರ್ಪರು ನೋಡ. ಆಜ್ಞಾಚಕ್ರದ ಎರಡೆಸಳ ಮಧ್ಯದಲ್ಲಿ ಓಂಕಾರಮಂತ್ರಮೂರ್ತಿ ಮಹಾಲಿಂಗವಾಗಿ ನೆಲಸಿರ್ಪರು ನೋಡ. ಇಂತು ಷಟ್ಚಕ್ರಂಗಳಮಧ್ಯದಲ್ಲಿ ನೆಲಸಿ, ನಿನ್ನ ಷಡ್ವಿಧಭೋಗಂಗಳ ಕೈಕೊಂಡು, ಆ ಪರಿಣಾಮವ ನಿನಗೆ ಸಂತೃಪ್ತಿಯ ಮಾಡಿ, ಶರಣಸತಿ ಲಿಂಗಪತಿ ಭಾವದಿಂದ ಮೇಲುಗಿರಿಮಂಟಪದ ನವರತ್ನ ಖಚಿತ ಸಹಸ್ರದಳ ಪದ್ಮಯುಕ್ತವಾದ ಪರಿಯಂಕದ ಮೇಲೆ ಲಿಂಗಾನುಭಾವರತಿಸುಖಾನಂದದಿಂದ ಶೋಭಿಸುವಂಥದೆ ಆಧ್ಯಾತ್ಮ ದೀಕ್ಷೆ. ಇಂತುಟೆಂದು ಶ್ರೀಗುರು ನಿಷ್ಕಳಂಕಮೂರ್ತಿ ಚೆನ್ನಬಸವರಾಜೇಂದ್ರನು ನಿರ್ಲಜ್ಜ ಶಾಂತಲಿಂಗದೇಶಿಕೋತ್ತಮಂಗೆ ನಿರೂಪಮಂ ಕೊಡುತಿರ್ದರು ನೋಡ ಸಂಗನಬಸವೇಶ್ವರ.
--------------
ಗುರುಸಿದ್ಧದೇವರು
ತನುವಿನ ಮೇಲಿಪ್ಪುದು ಇಷ್ಟಲಿಂಗವೆಂದೆಂಬರು. ಆತ್ಮನ ನೆನಹಿನಲ್ಲಿಪ್ಪುದು ಪ್ರಾಣಲಿಂಗವೆಂದೆಂಬರು. ಇಂತೀ ಘಟಕ್ಕೂ ಆತ್ಮಕ್ಕೂ ಉಭಯ ಲಿಂಗವುಂಟೆ ? ಹೊರಗಳ ಅಸ್ಥಿ ಚರ್ಮಕ್ಕೆ ಬೇರೊಂದು ಅಸುವ ಕಲ್ಪಿಸಬಹುದೆ ? ಒಳಗಳ ಕರುಳು, ಮಜ್ಜೆ, ಮಾಂಸಕ್ಕೆ ಬೇರೊಂದು ಅಸುವಿನ ಕಲೆಯುಂಟೆ ? ಇದಕ್ಕೆ ದೃಷ್ಟವ ಕಂಡಡೆ ಇಷ್ಟಲಿಂಗ ಪ್ರಾಣಲಿಂಗವೆಂಬುದಕ್ಕೆ ಕಟ್ಟುಂಟು. ಅದು ಅಚೇತನವಪ್ಪ ನಿರವಯಕ್ಕೆ ಅಚೇತನವಪ್ಪುದೊಂದು ದೃಷ್ಟ; ನಿರವಯ ಸಾವಯವದಲ್ಲಿ ಸಂಬಂಧಿಸಿ ಕುರುಹಾದ ಭೇದ. ಆ ಕಾಯದ ಒಳ ಹೊರಗಿನ ನೋವಿನ ಭೇದದಂತೆ, ಆ ಉಭಯವನರಿವ ಆತ್ಮ ಒಂದೆಯಾಗಿ, ಇಂತೀ ಕಾಯದ ಇಷ್ಟವೆಂದು, ಆತ್ಮನ ಅರಿವೆಂದು, ಎರಡೆನಿಸುವ ಲಿಂಗವೆಂಬುದೊಂದು ಕುರುಹಿಲ್ಲ. ಅದು ಏಕ ಏವ ಸ್ವರೂಪು; ಅದು ಚಿದ್ಘನ ಸ್ವರೂಪು; ಅದು ಘಟಮಠದ ಬಯಲಿನ ಗರ್ಭದಂತೆ, ಎನ್ನಯ್ಯಪ್ರಿಯ ಇಮ್ಮಡಿ ನಿಃಕಳಂಕಮಲ್ಲಿಕಾರ್ಜುನಲಿಂಗವು ಅತ್ಯತಿಷ್ಠದ್ದಶಾಂಗುಲನಾಗಿಪ್ಪನು.
--------------
ಮೋಳಿಗೆ ಮಹಾದೇವಿ
ಸ್ಥಳಕುಳವನೆತ್ತಿದಲ್ಲಿ ಸಮಯಕ್ಕೆ ದೂರ. ಚಿದ್ಘನ ಭೇದ ಭೇದಾಂತವನೆತ್ತಿದಲ್ಲಿ ಅಧ್ಯಾತ್ಮಕ್ಕೆ ದೂರ. ಸರ್ವವು ಸಮವೆಂದಡೆ ವಿಧಿ ನಿಷೇಧ ಕಾಲಕರ್ಮಕ್ಕೊಳಗಹರುಂಟು. ಅದು ತನ್ನೊಪ್ಪದ ದರ್ಪಣದಂತೆ; ಪುಣ್ಯಾರಣ್ಯದಹನ ಭೀಮೇಶ್ವರಲಿಂಗ ನಿರಂಗಸಂಗ.
--------------
ಕೋಲ ಶಾಂತಯ್ಯ
ಅಯ್ಯಾ, ಸದಾಚಾರವೆಂದಡೆ ಗುರುಲಿಂಗಜಂಗಮದಾರ್ಚನೆ, ಪಾದೋದಕ ಪ್ರಸಾದ ಸೇವನೆ, ಪಂಚಾಕ್ಷರ ಷಡಕ್ಷರ ಸ್ತೋತ್ರ, ಚಿದ್ಘನ ಮಹಾಲಿಂಗಧ್ಯಾನ, ಪರದ್ರವ್ಯ ನಿರಸನ. ಇಂತಿದು ನಿತ್ಯವೆಂದು ಸದ್ಗುರು ಮುಖದಿಂ ತಿಳಿದು, ಭಿನ್ನವಿಲ್ಲದೆ ಆಚರಿಸುವದೆ ಆಚಾರವಲ್ಲದೆ ಶುದ್ಧಶೈವರ ಹಾಂಗೆ ನಂದಿ ವೀರಭದ್ರ ಹಾವುಗೆ ಗದ್ದುಗೆ ಕಂಥೆ ಕಮಂಡಲು ಲಿಂಗಂಗಳೆಂದು ಇದಿರಿಟ್ಟು ಪೂಜಿಸುವವನ ಮನೆಯ ಪಾಕ, ಮದ್ಯ ಮಾಂಸ ಕಾಣಾ ಕಲಿದೇವರದೇವ.
--------------
ಮಡಿವಾಳ ಮಾಚಿದೇವ
ಅಯ್ಯಾ, ಶ್ರೀಗುರು ಕರುಣಿಸಿಕೊಟ್ಟ ಲಿಂಗ ಜಂಗಮವಲ್ಲದೆ, ಅನ್ಯದೈವಂಗಳ ತ್ರೈಕರಣದಲ್ಲಿ ಅರ್ಚಿಸದಿರ್ಪುದೆ ಲಿಂಗಾಚಾರವೆಂಬೆನಯ್ಯಾ. ಭಕ್ತನಾದಡೆ ಸತ್ಯಶುದ್ಧ ಕಾಯಕ [ವ ಮಾಡಿ], ಮಹೇಶನಾದಡೆ ಸತ್ಯಶುದ್ಧ ಭಿಕ್ಷವ ಬೇಡಿ ಸಮಸ್ತ ಪ್ರಾಣಿಗಳಲ್ಲಿ ಪಾತ್ರಾಪಾತ್ರವ ತಿಳಿದು ಹಸಿವು ತೃಷೆ ಶೀತಕ್ಕೆ ಪರಹಿತಾರ್ಥಿಯಾಗಿರ್ಪುದೆ ಸದಾಚಾರವೆಂಬೆನಯ್ಯಾ. ಗುರುಮಾರ್ಗಾಚಾರದಲ್ಲಿ ನಿಂದ ಶಿವಲಾಂಛನಧಾರಿಗಳೆಲ್ಲಾ ಪರಶಿವಲಿಂಗವೆಂದು ಭಾವಿಸಿ, ಅರ್ಥ ಪ್ರಾಣಾಭಿಮಾನವನರ್ಪಿಸುವುದೆ ಶಿವಾಚಾರವೆಂಬೆನಯ್ಯಾ. ಅಷ್ಟಾವರಂಣಗಳ ಮೇಲೆ ಅನ್ಯರಿಂದ ಕುಂದು ನಿಂದೆಗಳು ಬಂದು ತಟ್ಟಿದಲ್ಲಿ ಗಣಸಮೂಹವನೊಡಗೂಡಿ ಆ ಸ್ಥಲವ ತ್ಯಜಿಸುವುದೆ ಗಣಾಚಾರವೆಂಬೆನಯ್ಯಾ. ಜಾತ್ಯಾಶ್ರಮ ಕುಲಗೋತ್ರ ನಾಮರೂಪು ಕ್ರಿಯಾರಹಿತನಾಗಿ, ಗುರೂಪಾವಸ್ಥೆಯಿಂದ ಗುರುವ ಪ್ರತ್ಯಕ್ಷವ ಮಾಡಿ, ಆ ಗುರುವಿನಿಂದ ಚಿದ್ಘನ ಮಹಾಲಿಂಗವ ಪಡೆದು, ಆ ಲಿಂಗಸಹಿತವಾಗಿ ಭಕ್ತಿಜ್ಞಾನವೈರಾಗ್ಯ ಪಾದೋದಕ ಪ್ರಸಾದ ವಿಭೂತಿ ರುದ್ರಾಕ್ಷಿ ಮಂತ್ರ ಮೊದಲಾದ ಷಟ್‍ಸ್ಥಲಮಾರ್ಗದಲ್ಲಿ ನಿಂದ ಭಕ್ತಗಣಂಗಳಲ್ಲಿ ಪಂಚಸೂತಕಂಗಳ ಕಲ್ಪಿಸದೆ ಅವರಿದ್ದ ಸ್ಥಳಕ್ಕೆ ಹೋಗಿ, ತನುಮನಧನಂಗಳ ಸಮರ್ಪಿಸಿ, ಅವರೊಕ್ಕುಮಿಕ್ಕುದ ಹಾರೈಸಿ ಹಸ್ತಾಂಜಲಿತರಾಗಿ ಪ್ರತ್ಯುತ್ತರವ ಕೊಡದಿರ್ಪುದೆ ಭೃತ್ಯಾಚಾರವೆಂಬೆನಯ್ಯಾ. ಮಲ ಮಾಯಾ ಪಾತಕ ಸೂತಕ ರಹಿತವಾದ ದೀಕ್ಷಾಗುರು, ಶಿಕ್ಷಾಗುರು, ಜ್ಞಾನಗುರುವಿನಿಂದ ವೇಧಾಮಂತ್ರ ಕ್ರಿಯಾದೀಕ್ಷೆಯ ಪಡೆದು ದ್ವಾದಶ ಮಲಪಾಶ ಕರ್ಮವ ತ್ಯಜಿಸಿ, ಮನ ಮಾರುತ ಮೊದಲಾದ ದ್ವಾದಶ ಇಂದ್ರಿಯಂಗಳ ಗುರುಪಾದಜಲದಿಂದ ಪ್ರಕ್ಷಾಲಿಸಿ ದಂತಪಙಫ್ತೆಕ್ರಿಯೆಗ? ಮಾಡಿ, ಕಟಿಸ್ನಾನ, ಕಂಠಸ್ನಾನ, ಮಂಡೆಸ್ನಾನ ಸರ್ವಾಂಗಸ್ನಾನವ ಮಾಡಿ ಕ್ರಿಯಾಭಸಿತದಿಂದ ಸ್ನಾನ ಧೂಲನ ಧಾರಣದ ಮರ್ಮವ ತಿಳಿದಾಚರಿಸಿ ಸಾಕಾರ ನಿರಾಕಾರ ಅಷ್ಟವಿಧಾರ್ಚನೆ ಷೋಡಷೋಪಚಾರದಿಂದ ಗುರು-ಲಿಂಗ-ಜಂಗಮವನರ್ಚಿಸಿ ನಿರ್ವಂಚಕತ್ವದಿಂದ ಘನಪಾದತೀರ್ಥಪ್ರಸಾದ ಮಂತ್ರದಲ್ಲಿ ನಿಂದ ನಿಜಾವಸ್ಥೆಯ ಕ್ರಿಯಾಚಾರವೆಂಬೆನಯ್ಯಾ ಅಂತರಂಗದಲ್ಲಿ ಕರಣವಿಷಯ ಕರ್ಕಶದಿಂದ ಅಹಂಕರಿಸಿ ಗುರುಹಿರಿಯರಲ್ಲಿ ಸಂಕಲ್ಪ ವಿಕಲ್ಪಗಳಿಂದ ಕುಂದು-ನಿಂದೆ ಹಾಸ್ಯ-ರೋಷಂಗಳೆಂಬ ಅಜ್ಞಾನವ ಬಳಸದೆ ಪರಮಪಾತಕರ ದರ್ಶನಸ್ಪರ್ಶನಸಂತರ್ಪಣೆ ಪಂಕ್ತಿಪಾಕವ ಕೊಳ್ಳದೆ ಸತ್ಯ ನಡೆನುಡಿಯುಳ್ಳ ಶಿವಶರಣಗಣಂಗಳಲ್ಲಿ ಷಡ್ವಿಧಭಕ್ತಿ ಮುಂದುಗೊಂಡು, ಎರಡೆಂಬತ್ತೆಂಟುಕೋಟಿ ವಚನಾನುಭವದಲ್ಲಿ ನಿಂದ ನಿಲುಕಡೆಯೆ ಜ್ಞಾನಾಚಾರವೆಂಬೆನಯ್ಯಾ. ತನುವಿಕಾರದಿಂದ ಕಾಮ ಕ್ರೋಧ ಲೋಭ ಮೋಹ ಮದ ಮತ್ಸರಂಗಳ ಬಳಕೆ ಮಾಡದೆ ಲೋಕದಂತೆ ನಡೆನುಡಿಗಳ ಬಳಸದೆ, ತನ್ನ ಗುಣಾವಗುಣಂಗಳ ಸ್ವಾತ್ಮಾನುಭವದಿಂದರಿದು, ದುರ್ಗುಈವ ತ್ಯಜಿಸಿ, ಸದ್ಗುಣವ ಹಿಡಿದು ಬಿಡದಿಪ್ಪುದೆ ಭಾವಾಚಾರವೆಂಬೆನಯ್ಯಾ. ಕೊಡುವಲ್ಲಿ ಕೊಂಬಲ್ಲಿ ಅತಿಯಾಸೆಯಿಂದ ಹುಸಿಯ ನುಡಿಯದೆ, ಕೊಟ್ಟ ಭಾಷೆಗ? ಪ್ರಾಣಾಂತ್ಯ ಬಂದಡೆಯೂ ನುಡಿಯಂತೆ ನಡೆವುದೆ ಸತ್ಯಾಚಾರವೆಂಬೆನಯ್ಯಾ. ಕಾಲ ಕಾಮರ ಬಾಧೆಗೊ?ಗಾಗದ ಹಠಯೋಗ ಫಲಪದಂಗ? ತಟ್ಟುಮುಟ್ಟು ಸೋಂಕುಗಳಿಲ್ಲದೆ ಲಿಂಗಾಣತಿಯಿಂದ ಬಂದೊದಗಿದ ಪರಿಣಾಮಪ್ರಸಾದದಲ್ಲಿ ಲೋಲುಪ್ತನಾಗಿರ್ಪುದೆ ನಿತ್ಯಾಚಾರವೆಂಬೆನಯ್ಯಾ. ಸರ್ವಾವಸ್ಥೆಯಲ್ಲಿ ದಶವಿಧಪಾದೋದಕ ಏಕಾದಶಪ್ರಸಾದ ಛತ್ತೀಸ ಪ್ರಣವ ಮೊದಲಾದ ಮಹಾಮಂತ್ರಂಗಳಲ್ಲಿ ಎರಕವನುಳ್ಳುದೆ ಧರ್ಮಾಚಾರವೆಂಬೆನಯ್ಯಾ. ಇಂತೀ ಏಕಾದಶವರ್ಮವ ಗುರುಕೃಪಾಮುಖದಿಂದರಿದು, ಆಚಾರವೆ ಅಂಗ ಮನ ಪ್ರಾಣ ಭಾವಂಗಳಾಗಿ, ಇಹಪರವ ವಿೂರಿ, ಪಿಂಡಾದಿ ಜ್ಞಾನಶೂನ್ಯಾಂತವಾದ ಏಕೋತ್ತರಮಾರ್ಗದಲ್ಲಿ ನಿಂದು, ಬಯಲೊಳಗೆ ಬಚ್ಚಬರಿಯ ನಿರ್ವಯಲ ಸಾಧಿಸುವುದೆ ಸರ್ವಾಚಾರ ಸಂಪತ್ತಿನಾಚಾರದ ನಿಲುಕಡೆ ನೋಡಾ ಇಂತು ಆಚಾರದ ಕುರುಹ ತಿಳಿದು ಪಂಚಾಚಾರವ ಬಹಿಷ್ಕರಿಸಿ ಸಪ್ತಾಚಾರವ ಗೋಪ್ಯವ ಮಾಡಿ, ದರಿದ್ರನಿಗೆ ನಿಧಿನಿಧಾನ ದೊರೆತಂತೆ, ರೋಗಿಗೆ ವೈದ್ಯದ ಲತೆ ದೊರೆತಂತೆ, ಮೂಕ ಫಲರಸವ ಸವಿದಂತೆ, ಕಳ್ಳಗೆ ಚೇಳೂರಿದಂತೆ, ತಮ್ಮ ಚಿದಂಗಸ್ವರೂಪರಾದ ಶರಣಗಣಂಗಳಲ್ಲಿ ಉಸುರಿ, ದುರ್ಜನಾತ್ಮರಲ್ಲಿ ಬಳಸದೆ ನಿಂದ ಪರಮಸುಖಿ ನಿಮ್ಮ ಶರಣನಲ್ಲದೆ ಉಳಿದ ಕಣ್ಗೆಟ್ಟಣ್ಣಗಳೆತ್ತ ಬಲ್ಲರಯ್ಯಾ ಕೂಡಲಚೆನ್ನಸಂಗಮದೇವಾ ?
--------------
ಚನ್ನಬಸವಣ್ಣ
ಚಿದ್ಘನ ಚಿತ್ಪ್ರಕಾಶ ಚಿದಾನಂದ ಲಿಂಗವೆ, ಎನ್ನ ಹೃದಯಕಮಲವ ಬೆಳಗುವ ಪರಂಜ್ಯೋತಿ ಲಿಂಗವೆ, ಎನ್ನ ಕರಸ್ಥಲಕ್ಕನುವಾದ ಲಿಂಗವೆ, ಎನ್ನ ಕಂಗಳ ಕೊನೆಯಲ್ಲಿ ಮೂರ್ತಿಯಪ್ಪೆಯಯ್ಯಾ ಧರ್ಮಿ ಕೂಡಲಚೆನ್ನಸಂಗಮದೇವಾ
--------------
ಚನ್ನಬಸವಣ್ಣ
ಇನ್ನಷ್ಟು ... -->