ಅಥವಾ

ಒಟ್ಟು 82 ಕಡೆಗಳಲ್ಲಿ , 31 ವಚನಕಾರರು , 70 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಅರುಹಿನ ಕುರುಹ ಕಾಣದೆ ಗಿರಿ ಕೋಡಗಲ್ಲ ಮೇಲೆ ತಲೆಕೆಳಗೆ ಮಾಡಿ ತಪಸ್ಸವ ಮಾಡಿದಡಿಲ್ಲ, ಕಾಲಕರ್ಮಂಗಳ ದಂಡಿಸಿದಡಿಲ್ಲ, ಪೃಥ್ವಿ ತಿರುಗಿ, ತೀರ್ಥಂಗಳ ಮಿಂದು, ನಿತ್ಯನೇಮಂಗಳ ಮಾಡಿದಡಿಲ್ಲ. ಜಲಸಮಾದ್ಥೀಯಲ್ಲಿ ಕುಳಿತಡಿಲ್ಲ, ಇದಕ್ಕೆ ಶ್ಲೋಕ : ಪೂಜಾಕೋಟಿಸಮಂ ಸ್ತೋತ್ರಂ ಸ್ತೋತ್ರಕೋಟಿಸಮಂ ಜಪಃ | ಜಪಕೋಟಿಸಮಂ ಧ್ಯಾನಂ ಧ್ಯಾನಕೋಟಿಮನೋಲಯಂ || ಇಂತೆಂದುಂದಾಗಿ, ಸುತ್ತಿಸುಳಿವ ಮನವನು ಚಿತ್ತದಲ್ಲಿರಿಸಿ ನಿಶ್ಚಿಂತವಾದಡೆ ನಿತ್ಯಪ್ರಕಾಶ ಗುರು ಗುಹೇಶ್ವರಲಿಂಗವು ಮತ್ತೆ ಅರಸಲುಂಟೇನಯ್ಯಾ? ಮಠವ್ಯಾಕೊ, ಪರ್ವತವ್ಯಾಕೊ, ಜನವ್ಯಾಕೋ, ನಿರ್ಜನವ್ಯಾಕೊ ಚಿತ್ತ ಸಮಾಧನವುಳ್ಳ ಪುರುಷಂಗೆ ? ಹೊರಗಣ ಧ್ಯಾನ ಮೌನ ಜಪತಪ ನಿತ್ಯನೇಮಂಗಳ್ಯಾಕೊ ತನ್ನ ತಾನರಿದ ಶರಣಂಗೆ ನಮ್ಮ ಗೊಹೇಶ್ವರಪ್ರಿಯ ನಿರಾಳಲಿಂಗ?
--------------
ಗುಹೇಶ್ವರಯ್ಯ
ಭಕ್ತಂಗೆ ತ್ರಿವಿಧಮಲ ನಾಸ್ತಿಯಾಗಿರಬೇಕು. ಮಾಹೇಶ್ವರಂಗೆ ಬಂಧ ಜಪ ನೇಮ ಕರ್ಮಂಗಳು ಹಿಂಗಿರಬೇಕು. ಪ್ರಸಾದಿಗೆ ಆಯತ ಸ್ವಾಯತ ಸನ್ನಹಿತವೆಂಬುದ ಸಂದೇಹಕ್ಕಿಕ್ಕದೆ ಸ್ವಯಸನ್ನದ್ಧವಾಗಿರಬೇಕು. ಪ್ರಾಣಲಿಂಗಿಯಾದಡೆ ಬಂದು ಸೋಂಕುವ ಸುಗುಣ ನಿಂದು ಸೋಂಕುವ ದುರ್ಗುಣ ಉಭಯ ಸೋಂಕುವುದಕ್ಕೆ ಮುನ್ನವೆ ಹಿಡಿವುದ ಹಿಡಿದು, ಬಿಡುವುದ ಬಿಟ್ಟು ಅರ್ಪಿಸಬೇಕು. ಶರಣನಾದಲ್ಲಿ ಆಗುಚೇಗೆಯೆಂಬುದನರಿಯದೆ ಸ್ತುತಿನಿಂದ್ಯಾದಿಗಳಿಗೆ ಮೈಗೊಡದೆ ರಾಗವಿರಾಗವೆಂಬುದಕ್ಕೆ ಮನವಿಕ್ಕದೆ ಜಿಹ್ವೆ ಗುಹ್ಯೇಂದ್ರಿಯಕ್ಕೆ ನಿಲುಕದೆ ಮದಗಜದಂತೆ ಇದಿರನರಿಯದಿಪ್ಪುದು. ಐಕ್ಯನಾದಲ್ಲಿ ಸುಗಂಧದ ಸುಳುಹಿನಂತೆ ಪಳುಕಿನ ರಾಜತೆಯಂತೆ, ಶುಕ್ತಿಯ ಅಪ್ಪುವಿನಂತೆ ಅಣೋರಣಿಯಲ್ಲಿ ಆವರಿಸಿ ತಿರುಗುವ ನಿಶ್ಚಯತನದಂತೆ ಬಿಂಬದೊಳಗಣ ತರಂಗದ ವಿಸ್ತರದಂಗದಂತೆ ಇಂತೀ ಷಟ್‍ಸ್ಥಲಕ್ಕೆ ನಿರ್ವಾಹಕವಾಗಿ ವಿಶ್ವಾಸದಿಂದ ಸಂಗನಬಸವಣ್ಣನ ಸಾಕ್ಷಿಯಾಗಿ ಬ್ರಹ್ಮೇಶ್ವರಲಿಂಗವನರಿದವರಿಗಲ್ಲದೆ ಸಾಧ್ಯವಲ್ಲ.
--------------
ಬಾಹೂರ ಬೊಮ್ಮಣ್ಣ
ಜಪ ತಪವ ಮಾಡಿದಡೇನಯ್ಯಾ ತಾನು? ನೇಮ ಸಮಾದ್ಥಿಯ ಮಾಡಿದಡೇನಯ್ಯಾ, ನಿಮ್ಮ ಪಾದೋದಕ ಪ್ರಸಾದವ ವರ್ಮವನರಿಯದನ್ನಕ್ಕ? ಮುಂಡೆಯ ಬದುಕಿಂಗೆ ಮೂಲಸ್ವಾಮಿಯ ಕುರುಹಿಡಬಹುದೆ? ಕಪಿಲಸಿದ್ಧಮಲ್ಲಿಕಾರ್ಜುನ.
--------------
ಸಿದ್ಧರಾಮೇಶ್ವರ
ಎಮ್ಮ ವಚನದೊಂದು ಪಾರಾಯಣಕ್ಕೆ ವ್ಯಾಸನದೊಂದು ಪುರಾಣ ಸಮ ಬಾರದಯ್ಯಾ. ಎಮ್ಮ ವಚನದ ನೂರೆಂಟರಧ್ಯಯನಕ್ಕೆ ಶತರುದಿ[್ರಯಯಾಗ] ಸಮ ಬಾರದಯ್ಯಾ. ಎಮ್ಮ ವಚನದ ಸಾಸಿರ ಪಾರಾಯಣಕ್ಕೆ ಗಾಯತ್ರಿ ಲಕ್ಷ ಜಪ ಸಮ ಬಾರದಯ್ಯಾ, ಕಪಿಲಸಿದ್ಧಮಲ್ಲಿಕಾರ್ಜುನಾ.
--------------
ಸಿದ್ಧರಾಮೇಶ್ವರ
ಜಯ ಜಯ ನಿರುಪಮ ನಿರವಯ ನಿಷ್ಕಲ ಜಯ ಜಯ ನಿಶ್ಚಲ ನಿರ್ಮಲ ನಿರ್ಗುಣ ಜಯ ಜಯ ಪರಮ ನಿರಂಜನ ಸದ್ಗುರು ಮಹಾಂತ ಶರಣಾರ್ಥಿ. | ಪಲ್ಲ | ಸುಳ್ಳೆ ನಿರ್ಬೈಲೆನಿಸಿ ಮೆರೆದಿ ಸುಳ್ಳೆ ಮಹಾಬೈಲಾಗಿ ತೋರಿದಿ ಸುಳ್ಳೆ ಚಿದ್ಬೈಲವಾಗಿ ಸಾರಿದಿ ಸುಳ್ಳೆ ಪರಬ್ರಹ್ಮಾ ಸುಳ್ಳೆ ಪರಶಿವ ಚಿತ್ತಬ್ಥಿತ್ತಿಯು ಸುಳ್ಳೆ ಇಚ್ಛೆಯ ನೆನವಕೊನರಿಸಿ ಸುಳ್ಳೆ ಮನಘನವೃಕ್ಷ ಮಾಡಿದಿ ಮಹಾಂತ ಶರಣಾರ್ಥಿ. | 1 | ಸುಳ್ಳೆ ನೆಲ ಜಲ ಅಗ್ನಿ ವಾಯು ಸುಳ್ಳೆ ಗಗನಾತ್ಮಾರ್ಕ ಚಂದ್ರಮ ಸುಳ್ಳೆ ತಾರಕ ಕಠೋರ ಮಹಾಮಹತ್ವಣುವಿಗಣು ಮಾಯೆ ಸುಳ್ಳೆ ಬೀಜದ ಸಸಿಯ ಫಲರಸ ಸುಳ್ಳೆ ಶೋಣಿತ ಶುಕ್ಲ ಶರೀರ ಸುಳ್ಳೆ ಹಮ್ಮು ಮತ್ತಾಶೆ ಮಾಡಿದೆ ಮಹಾಂತ ಶರಣಾರ್ಥಿ. | 2 | ಸುಳ್ಳೆ ತ್ರಿಜಗ ಸಚರಾಚರಗಳು ಸುಳ್ಳೆ ತನ್ನನು ತಾನೆ ಎಂಬುದು ಸುಳ್ಳೆ ಕುಲ ಛಲ ಸುಳ್ಳೆ ಮತಿ ತತಿ ಸುಳ್ಳೆ ವ್ರತಶೀಲಾ ಸುಳ್ಳೆ ತಾ ಸತ್ಕರ್ಮ ಸದ್ಗುಣ ಸುಳ್ಳೆ ತಾ ದುಷ್ಕರ್ಮ ದುರ್ಗುಣ ಸುಳ್ಳೆ ಸರ್ವವ್ಯಾಪಾರ ಮಾಡಿದೆ ಮಹಾಂತ ಶರಣಾರ್ಥಿ. | 3 | ಸುಳ್ಳೆ ಕಾಮ ಶೀಮ ನೇಮವು ಸುಳ್ಳೆ ಭೋಗ ತ್ಯಾಗ ಯೋಗವು ಸುಳ್ಳೆ ಜಪ ತಪ ಧ್ಯಾನ ಮೌನವು ಸುಳ್ಳೆ ಪದಫಲವು ಸುಳ್ಳೆ ಇಹಪರ ಪಾಪ ಪುಣ್ಯವು ಸುಳ್ಳೆ ಸ್ವರ್ಗ ನರಕ ಸುಖ ದುಃಖ ಸುಳ್ಳೆ ನೋವು ಸಾವು ಮಾಡಿದೆ ಮಹಾಂತ ಶರಣಾರ್ಥಿ. | 4 | ಸುಳ್ಳೆ ಭಾವದ ಭ್ರಮಿಗೆ ಭವಭವ ಸುಳ್ಳೆ ತಾ ತಿರುತಿರುಗಿ ಬಳಲುತೆ ಸುಳ್ಳೆ ಉತ್ಪತ್ತಿ ಸ್ಥಿತಿ ಲಯಂಗಳಾಗಿ ಮಣ್ಣಾಯಿತು ಸುಳ್ಳೆ ತಾ ಮಹಾಮೇರು ಮಹತ್ವವು ಸುಳ್ಳೆ ಈ ಮಾಯಾ ಗಮನವು ಸುಳ್ಳೆ ಶರಣರ ಐಕ್ಯ ಮಾಡಿದಿ ಮಹಾಂತ ಶರಣಾರ್ಥಿ | 5 | ಸುಳ್ಳೆ ಅಷ್ಟಾವರಣದರ್ಚನೆ ಸುಳ್ಳೆ ತಾ ಅಷ್ಟಾಂಗಯೋಗವು ಸುಳ್ಳೆ ಬೆಳಗಿನ ಬೆಳಗು ಅದ್ವೆ ೈತಾದಿ ನಿಜಮುಕ್ತಿ ಸುಳ್ಳೆ ಖರೇ ಮಾಡಿ ಸಲೆ ಕಾಡಿದಿ ಸುಳ್ಳೆ ಸುಳ್ಳೆನಿಸುತ್ತೆ ಹಬ್ಬಿದಿ ಸುಳ್ಳೆ ಆಟವನಾಡಿ ಮೆರೆಯುವ ಮಹಾಂತ ಶರಣಾರ್ಥಿ. | 6 | ಸುಳ್ಳೆ ತಾ ಶಿವ ಸುಳ್ಳೆ ನೀ ಗುರು ಸುಳ್ಳೆ ನಾ ಶಿಷ್ಯಾಗಿ ಈ ಭವಕರ ಸುಳ್ಳೆ ಲಿಂಗವ ಕಂಡು ಜಂಗಮತೀರ್ಥಪ್ರಸಾದ ಸುಳ್ಳೆ ಭಸ್ಮ ಶಿವೇಕ್ಷಮಣಿ ಮಂತ್ರ ಸುಳ್ಳೆ ಅನುಗೊಳಿಸ್ಯಾತ್ಮ ತತ್ವವ ಸುಳ್ಳೆ ಧ್ಯಾನವ ಹುಡುಕಿ ಮಾಡಿದಿ ಮಹಾಂತ ಶರಣಾರ್ಥಿ | 7 | ಸುಳ್ಳೆ ಹುಡುಕಿ ನಾ ನನ್ನ ಮರೆದೆ ಸುಳ್ಳೆ ಹುಡುಕಿ ನಾ ನಿನ್ನ ಅರಿದೆ ಸುಳ್ಳೆ ಹುಡುಕಿ ಮುಕ್ತಿ ಮೆರೆದೆನು ಸುಳ್ಳೆ ತಾನಾಯಿತು ಸುಳ್ಳೆ ಬಂದಿತು ಸುಳ್ಳೆ ನಿಂದಿತು ಸುಳ್ಳೆ ಹೊಂದಿತು ಸುಳ್ಳೆ ಹೋಯಿತು ಸುಳ್ಳೆ ಖರೆ ಮಾಡಿಸದೆ ಕಾಡಿದಿ ಮಹಾಂತ ಶರಣಾರ್ಥಿ | 8 | ಸುಳ್ಳೆ ಇಪ್ಪತ್ತೈದು ನಿಜಪದ ಸುಳ್ಳೆ ಹತ್ತೊಂಬತ್ತು ವಚನಗಳು ಸುಳ್ಳೆ ಈ ಪರಿವದ್ರ್ಥಿನೊಂಬತ್ತೆಂದೆನು ಹಾಡು ಸುಳ್ಳೆ ಹಾಡುವದಾಯ್ತು ಹಾಡು ಸುಳ್ಳೆ ಹದಿನೇಳ್ನೂರೈವತ್ತು ಸರ್ವಕೆ ಸುಳ್ಳೆ ತಿಳಿದರೆಡುಳ್ಳೆ ಮಾಡಿದಿ ಮಹಾಂತ ಶರಣಾರ್ಥಿ | 9 |
--------------
ಮಡಿವಾಳಪ್ಪ / ಕಡಕೋಳ ಮಡಿವಾಳಪ್ಪ
ನುಡಿವ ಶಬ್ದವೆ ಕಾಯದ ಕಳವಳ, ಒಡಲುಗೊಂಡವರೆಲ್ಲಾ ಕೇಳಿರಯ್ಯಾ. ಸಂಜೆ ನೇಮ ನಿತ್ಯ ಜಪ ತಪ ಸಮಾದ್ಥಿ ಏನೆಂದಳೇನೆಂದು ಬರೆವಂತೆ ಬರೆವ ನುಡಿಯೊಳಗಿರ್ದು, ನುಡಿ ತಪ್ಪಿದೆನೆಂಬ ಈ ನುಡಿಗೆ ನಾಚುವೆನೆಂದನಂಬಿಗ ಚೌಡಯ್ಯ.
--------------
ಅಂಬಿಗರ ಚೌಡಯ್ಯ
ಧರೆಯಾಕಾಶವಿಲ್ಲದಂದು, ತ್ರೈಮಂಡಲ ನೆಲೆಗೊಳ್ಳದಂದು, ಹೋಮ ನೇಮ ಜಪ ತಪವಿಲ್ಲದಂದು ನಿಮ್ಮನಾರು ಬಲ್ಲರು ? ಹರಿ ಬ್ರಹ್ಮಾದಿಗಳಿಗೆ ಅಗೋಚರ, ನಿರ್ಲೇಪ ನಿರಂಜನನಾಗಿ_ ವೇದಂಗಳರಿಯವು, ಶಾಸ್ತ್ರ ಸ್ಮೃತಿಗಳು ನಿಮ್ಮನರಿಯವು. ಗಗನಕಮಲಕುಸುಮ ಪರಿಮಳದಿಂದತ್ತತ್ತಲು ಗುಹೇಶ್ವರಾ ನಿಮ್ಮ ನಿಲವನಾರು ಬಲ್ಲರು ?
--------------
ಅಲ್ಲಮಪ್ರಭುದೇವರು
ಸಂಗವನರಿದು ಜರೆದು ಸಂಗಸಂಬಂಧವಾದ ಚಿನುಮಯ ಚನ್ನಮಹೇಶ್ವರನ ತನುಮನಭಾವಂಗಳು ಮತ್ತೊಂದಕ್ಕೆ ಆಸ್ಪದವಿರಹಿತವಾಗಿರ್ದವು. ಅದೆಂತೆಂದೊಡೆ, ಗುರುಭಕ್ತಿಸೇವಾನುಕೂಲಿ ಕಾಯದ ಗತಿಯುಳ್ಳನ್ನಕ್ಕರ ಕಂಡು ಮಾಡಿ ವಿನೋದಿಸಬೇಕೆಂಬುದೊಂದು ನಿರುತ, ಮಂತ್ರ ಧ್ಯಾನ ಜಪ ಸ್ತೋತ್ರಾದಿಗಳಿಂದೆ ಲಿಂಗಾರ್ಚನೆಯವಸರ ಮನವುಳ್ಳನ್ನಕ್ಕರ ಮಾಡಿ ನೋಡಿ ಆನಂದಿಸಬೇಕೆಂಬುದೊಂದು ನಿಷ್ಠೆ. ಅನ್ನ ವಸ್ತ್ರ ಆಭರಣಾದಿ ಹದಿನೆಂಟು ತೆರದ ಭಕ್ತಿಯಾರಾಧನೆ ಪ್ರಾಣಾದಿ ದ್ರವ್ಯವುಳ್ಳನ್ನಕ್ಕರ ಮಾಡಿ ನೀಡಿ ಸುಖಿಸಬೇಕೆಂಬುದೊಂದು ಭಾವದ ನಿರುತ. ಇಂತು ತ್ರಿವಿಧ ಪದದಲ್ಲಿ ತ್ರಿವಿಧ ವಿದ್ಯಾಸನ್ನಿಹಿತನಾಗಿ ಎಡೆದೆರಹಿಲ್ಲದಿರುತಿರ್ದನು ಗುರುನಿರಂಜನ ಚನ್ನಬಸವಲಿಂಗನಲ್ಲಿ.
--------------
ದೇಶಿಕೇಂದ್ರ ಸಂಗನಬಸವಯ್ಯ
ಇಂದು ನಾಳೆ ಮುಕ್ತಿಯ ಪಡೆವೆನೆಂಬ ಶಿಷ್ಯಂಗೆ ಮುಂದಳ ಮುಕ್ತಿಯ ತೋರಿಹೆನೆಂಬ ಗುರುಗಳ ನೋಡಿರೆ ! ಹೋಮ, ನೇಮ, ಜಪ, ತಪಗಳ ಮಾಡಿ ತಾನುಂಡು ಫಲವುಂಟೆಂದ ಗುರು ಹುಸಿದು ಸತ್ತ, ಶಿಷ್ಯ ಹಸಿದು ಸತ್ತ. ಹಿಂದಣ ಕಥೆಯ ಹೇಳುವಾತ ಹೆಡ್ಡ, ಮುಂದಣ ಕಥೆಯ ಹೇಳುವಾತ ಮೂಢ, ಇಂದಿನ ಘನವ ಹೇಳುವಾತನೆ ಹಿರಿಯನಯ್ಯಾ. ತಾ ಹುಟ್ಟಿದಂದೆ ಯುಗಜುಗಂಗಳು ಹುಟ್ಟಿದವು, ತಾನಳಿದಲ್ಲೆ ಯುಗಜುಗಂಗಳಳಿದವು. ತನ್ನ ನೇತ್ರಕ್ಕಿಂಪಾದುದೆ ಸುವರ್ಣಸುವಸ್ತು, ತನ್ನ ಶ್ರೋತಕ್ಕೆ ಸೊಂಪಾದುದೆ ವೇದಶಾಸ್ತ್ರ, ಪುರಾಣ. ತನ್ನ ಘ್ರಾಣಕ್ಕಿಂಪಾದುದೆ ಪರಿಮಳ, ತನ್ನ ಜಿಹ್ವೆಗಿಂಪಾದುದೆ ರುಚಿ, ತನ್ನ ಮನ ಮುಳುಗಿದುದೆ ಲಿಂಗ. ತನ್ನ ನೆತ್ತಿಯಲ್ಲಿ ಸತ್ಯರ್ಲೋಕ, ಪಾದದಲ್ಲಿ ಪಾತಾಳಲೋಕ, ನಡುವೆ ಹನ್ನೆರಡು ಲೋಕ. ಅಂಡಜ ಪಿಂಡಜ ಉದ್ಭಿಜ ಜರಾಯುಜವೆಂಬ ಎಂಬತ್ತು ನಾಲ್ಕುಲಕ್ಷ ಜೀವರಾಶಿಗಳು. ತನ್ನಲ್ಲಿ ಕಾಯವು, ತನ್ನಲ್ಲಿ ಜೀವವು, ತನ್ನಲ್ಲಿ ಪುಣ್ಯವು, ತನ್ನಲ್ಲಿ ಪಾಪವು, ತನ್ನಲ್ಲಿ ಶಬ್ದವು, ತನ್ನಲ್ಲಿ ನಿಶ್ಯಬ್ದವು. ಒಂದು ಒಡಲೆಂಬ ಊರಲ್ಲಿ ಒಂಬತ್ತು ಶಿವಾಲಯವು ಆ ಶಿವಾಲಯದ ಶಿಖರದ ಮೇಲೆ ಶಿವಲಿಂಗದೇವರು ಪೂರ್ವಭಾಗದಲ್ಲಿ ಚಂದ್ರಾದಿತ್ಯರು, ಪಶ್ಚಿಮ ಭಾಗದಲ್ಲಿ ಪರಶಿವನು ಉತ್ತರ ಭಾಗದಲ್ಲಿ ಮಹೇಶ್ವರನು, ದಕ್ಷಿಣ ಭಾಗದಲ್ಲಿ ರುದ್ರನು ಇಂತೀ ಪಂಚೈವರ ಮನದ ಕೊನೆಯ ಕೀಲಿನ ಸಂಚವನರಿದು ತುರ್ಯಾವಸ್ಥೆಯಲ್ಲಿ ನಿಲಿಸಿ ಒಡಲುವಿಡಿದು ಕಾಂಬುದೆ ಉಪಮೆ. ಈ ಘಟದೇವತೆಯ ಸಟೆಯೆಂದು ಬಿಸುಟು ಮುಂದೆ ತಾ ದಿಟವಪ್ಪುದಿನ್ನೆಲ್ಲಿಯದೊ ? ಪೃಥ್ವಿಯಳಿದಂದೆ ಭೋಗಾದಿ ಭೋಗಂಗಳಳಿದವು. ಅಪ್ಪುವಳಿದಂದೆ ಮಾಯಾಮೋಹಾದಿಗಳಳಿದವು. ತೇಜವಳಿದಂದೆ ಹಸಿವು ತೃಷೆಗಳಳಿದವು. ವಾಯುವಳಿದಂದೆ ನಡೆನುಡಿ ಚೈತನ್ಯಂಗಳಳಿದವು. ಆಕಾಶವಳಿದಂದೆ ಅವು ಅಲ್ಲಿಯೆ ಲೀಯವಾಯಿತ್ತು. ಇದು ಕಾರಣ ಉರಿಕೊಂಡ ಕರ್ಪುರದ ಕರಿ ಕಂಡವರುಂಟೆ ? ಅಪ್ಪುವುಂಡ ಉಪ್ಪಿನ ಹರಳ ಮರಳಿ ಹೊರೆಯ ಕಟ್ಟಿ ಹೊತ್ತವರುಂಟೆ ? ವಾಯುಕೊಂಡ ಜ್ಯೋತಿಯ ಬೆಳಗ ಕಂಡವರುಂಟೆ ? ಹರಿ ಬ್ರಹ್ಮಾದಿಗಳ್ಗೆಯು ಕಾಣಬಾರದಾಗಿ. ಮಣ್ಣಿನ ಸಾರಾಯದಿಂದ ಮರನುತ್ಪತ್ಯ. ಮರದ ಸಾರಾಯದಿಂದ ಎಲೆಯುತ್ಪತ್ಯ ಎಲೆಯ ಸಾರಾಯದಿಂದ ಹೂವ ಉತ್ಪತ್ಯ ಹೂವ ಸಾರಾಯದಿಂದ ಕಾಯಿ ಉತ್ಪತ್ಯ ಕಾಯ ಸಾರಾಯದಿಂದ ಹಣ್ಣು ಉತ್ಪತ್ಯ ಹಣ್ಣಿನ ಸಾರಾಯದಿಂದ ರುಚಿ ಉತ್ಪತ್ಯ ರುಚಿಯಿಂದತ್ತ ಇಲ್ಲವೆಂಬ ತತ್ವ. ಮಣ್ಣು ಮರನು ಅಳಿದ ಬಳಿಕ ಬೇರೆ ರುಚಿಯಿಪ್ಪಠಾವುಂಟೆ ? ದೇಹವಳಿದ ಬಳಿಕ ಪ್ರಾಣವಿಪ್ಪುದಕ್ಕೆ ಠಾವುಂಟೆ ? ಇಲ್ಲವಾಗಿ; ಇದು ಕಾರಣ, ಗುಹೇಶ್ವರನೆಂಬ ಲಿಂಗವ ಒಡಲು ವಿಡಿದು ಕಂಡೆ ಕಾಣಾ. ಸಿದ್ಧರಾಮಯ್ಯ.
--------------
ಅಲ್ಲಮಪ್ರಭುದೇವರು
ಜಪ ತಪ ನೇಮ ನಿತ್ಯದಿಂದ ನಿಶ್ಚಂತರೂಪನ ಕಂಡೆ, ಏನೆಂಬಿರಿ? ಆ ಪರಾತ್ಪರದೊಳಗಾಡುವ ಶರಣರ ಪಾದ ನಖದೊಳ್ಬರೆಯೆ ಬಸವಪ್ರಿಯ ಕೂಡಲಚೆನ್ನಬಸವಣ್ಣ.
--------------
ಹಡಪದ ಅಪ್ಪಣ್ಣ
ಉರಿ ಸಿರಿ ಭೂತ ಭವಿಷ್ಯತ್ ವರ್ತಮಾನಂಗಳಲ್ಲಿ ನೋಡುವ ಆಲಿ ಮೇಲಕ್ಕೆ ಸಿಕ್ಕಿ, ಭಾವ ಅಂಗವ ಮರೆದು, ಧ್ಯಾನವೆ ಮೂರ್ತಿ ಜಪ. ಪಂಚಾಕ್ಷರಿಯ ಪ್ರಣವ ಏಕೀಕರಿಸಿದಲ್ಲಿ, ಸಂದಿತ್ತು ಜಪ ಅರ್ಕೇಶ್ವರಲಿಂಗಕ್ಕೆ.
--------------
ಮಧುವಯ್ಯ
ಸರ್ವಕಳಾ ಚಿತ್ರ ವಿಚಿತ್ರವೆಂಬ ಮೋಹನ ಚಿಚ್ಫಕ್ತಿಯು ವೇದೋಪನಿಷತ್ತು ಶಾಸ್ತ್ರ ಆಗಮ ಪುರಾಣ ಶಬ್ದ ಜ್ಯೋತಿಷ ವ್ಯಾಕರಣ ಯೋಗಾಭ್ಯಾಸ ವೀಣಾಭರಣ[ತ?] ಛಂದಸ್ಸು ನಾಟಕಾಲಂಕಾರ ಇಂತೀ ಪರೀಕ್ಷೆಯು ನೋಡುವ ಅಯ್ಯಗಳ ಎಲ್ಲ ತನ್ನ ಜವನಿಕೆಯೊಳಗೆ ಕೆಡಹಿಕೊಂಡಿತ್ತು. ಧ್ಯಾನ ಮೌನದಿಂದ ಕಂಡೆಹೆನೆಂಬವರ ಅಜ್ಞಾನಕೆ ಒಡಲುಮಾಡಿತ್ತು. ತತ್ವದವ ನೋಡೆಹೆನೆಂಬವರ ಮೆಚ್ಚಿಸಿ ಮರುಳುಮಾಡಿತ್ತು. ಅಂಗವೆಲ್ಲವನರಿದೆನೆಂಬವರ ಹಿಂಗದೆ ತನ್ನ ಅಂಗದ ಬಲೆಯೊಳಗೆ ಕೆಡಹಿತ್ತು. ಲಿಂಗಮೋಹಿಗಳೆಂಬವರ ತನ್ನ ಸಂಗದ ಅನಂಗನ ಅಂತರಂಗಕ್ಕೆ ಒಳಗುಮಾಡಿತ್ತು. ವೇದವೇದ್ಯವೆಂಬರೆಲ್ಲರನು ಏಕಾಂತದೊಳಗೆ ತಳಹೊ[ವ?]ಳಗೊಳಿಸಿತ್ತು. ಕಣ್ಣ ಮುಚ್ಚಿ ಜಪ ಧ್ಯಾನ ಶೀಲ ಮೌನ ನೇಮ ನಿತ್ಯವ ಹಿಡಿವ ವ್ರತಿಗಳ ನಾನಾ ಭವದಲ್ಲಿ ಬರಿಸಿತ್ತು. ವಾಗದ್ವೈತವ ನುಡಿವ ಅರುಹಿರಿಯರೆಂಬವರ ಜಾಗ್ರದಲ್ಲಿ ಆಕ್ರಮಿಸಿಕೊಂಡಿತ್ತು. ಸ್ವಪ್ನದಲ್ಲಿ ಮೂಅರ್sತರ ಮಾಡಿತ್ತು. ಸುಷುಪ್ತಿಯಲ್ಲಿ ಕಂಡೆನೆಂಬವರ ವ್ಯಾಪ್ತಿಯೆಂಬ ಬೇಳುವೆಗೊಳಗುಮಾಡಿತ್ತು. ಇಂತೀ ತ್ರಿವಿಧದೊಳ ಹೊರಗಿನ ಭೇದವನರಿಯದ ಪ್ರಪಂಚುದೇಹಿಗಳಿಗೆ ವಿರಕ್ತಿ ಇನ್ನೆಲ್ಲಿಯದು ? ಘಟಿಸದು ಕಾ[ಣಾ]. ಬಸವಪ್ರಿಯ ವಿಶ್ವಕರ್ಮಟಕ್ಕೆ ಕಾಳಿಕಾವಿಮಲ ರಾಜೇಶ್ವರಲಿಂಗವು ನಿರ್ಧರವಾದಲ್ಲಿ ನಿವಾಸವಾಗಿಪ್ಪನು.
--------------
ಬಾಚಿಕಾಯಕದ ಬಸವಣ್ಣ
ಶಿವಶರಣಂಗೆ ನಿಜೈಕ್ಯಪದಂಗಳು ದೊರೆಕೊಂಬುವ ತೆರನ ಶ್ರುತಿ ಗುರು ಸ್ವಾನುಭಾವದಿಂದ ನುಡಿವುತಿಪ್ಪೆ ಕೇಳಿರಯ್ಯ. ಜನನ ಮರಣಕಂಜಿ ತಾನಾರೆಂಬುದಂ ಸ್ವಾನುಭಾವದಿಂ ನೋಡಿ ಎಲ್ಲಿಂದೊಗೆದೆನೆಂಬುದಂ ಬಗೆಗೊಂಡು ಅರಿವು ತಲೆದೋರಿ ಪುಣ್ಯಪಾಪಕ್ಕೆ ಬೀಜಾಂಕುರಮಪ್ಪ ಮಲತ್ರಯಂಗಳಿಗೆ ತಲೆಗೊಡಹಿ ಭೋಗಮಂ ನೀಗಿ ಭುಕ್ತಿಯಿಂ ತೊತ್ತಳದುಳಿದು ಬಂಧುವರ್ಗಮಂ ಭಂಗಿಸಿ ಉಪಾದ್ಥಿಕೆಯನುರುಹಿ ಒಡಲಾಸೆಯಂ ತಲೆವೊಡೆಯನಿಕ್ಕಿ ಅಹಂಕಾರಂಗಳನಳಿದು ಮಮಕಾರಂಗಳಂ ಮುಂದುಗೆಡಿಸಿ ಲೋಕದ ನಚ್ಚುಮೆಚ್ಚಿಗೆ ಕಿಚ್ಚುಗುತ್ತಿ ಜ್ಞಾನ ಕ್ರೀಗಳಲ್ಲಿ ದೃಢವ್ರತವಾಗಿ ಕರಿಗೊಂಡು ಆಸನದಲ್ಲಿ ಮರಹ ಮಗ್ಗಿಸಿ ಮನ ತನುವನಪ್ಪಿ ಸರ್ವ ಕರಣಂಗಳಂ ಚರಲಿಂಗಮುಖವ ಮಾಡಿ ಆತ್ಮವಿದ್ಯಾಲಿಂಗದಲ್ಲಿ ಮನಸಂದು ಪಂಚಪ್ರಸಾದಾತ್ಮಕನಾದ ಘನಲಿಂಗದ ಬೆಳಗ ಪಿಂಡಾಂಡದಲ್ಲಿ ಜ್ಞಾನದಿಕ್ಕಿನಿಂದ ಪರಿಪೂರ್ಣವಾಗಿ ಕಂಡು ಪೆಣ್ದುಂಬಿಯನಾದವೆ ಮೊದಲಾದ ಸಿಂಹನಾದವೆ ಕಡೆಯಾದ ಆರೆರಡು ಪ್ರಕಾರದ ನಾದಂಗಳಂ ಕೇಳಿ ಹರುಷಂ ಹರವರಿಗೊಂಡು ಎನಗೆ ಶಿವತತ್ವ ಸಾಧ್ಯವಾಯಿತು. ಪರಶಿವನಲ್ಲಿ ಒಡಗೂಡಿ ಪರಬ್ರಹ್ಮವಾದೆನೆಂದು, ಅಹಂಕರಿಸಿ ಕ್ರೀಯಂ ಬಿಟ್ಟು ಗಂಬ್ಥೀರಜ್ಞಾನದೊಳಿರುವ ಶರಣಂಗೆ ಮೂರೊಂದು ವಿಧದ ಪದಂಗಳು ಬಪ್ಪವಲ್ಲದೆ ಶಿವನಲ್ಲಿ ನಿಜೈಕ್ಯವಿಲ್ಲ. ಅದೇನು ಕಾರಣವೆಂದೊಡೆ- ಷಟ್ಸ ್ಥಲಬ್ರಹ್ಮಿಯೆನಿಸಿಕೊಂಡು ಆರುಸ್ಥಲವಿಡಿದು ಆಚರಿಸಿ ಮೂರುಸ್ಥಲದಲ್ಲಿ ಅವಧಾನಿಯಾಗಿ ಎರಡೊಂದು ಸ್ಥಲ ಒಂದಾದ ಸ್ಥಲದಲ್ಲಿ ಶರಣಲಿಂಗವೆಂಬುಭಯವಳಿದು ನೂರೊಂದುಸ್ಥಲದೊಳಗೆ ಪ್ರಭಾವಿಸಿ ಪರಿಪೂರ್ಣವಾಗಿ ಸಿದ್ಧಪ್ರಸಾದವೆಂಬ ನಿಷ್ಕಲಬ್ರಹ್ಮದಲ್ಲಿ ಉರಿ ಕರ್ಪೂರದಂತೆ ಬೆಳಗುದೋರಿ ಶುದ್ಧಪ್ರಸಾದವನಂಗಂಗೊಂಡು ನಿರಂಜನ ಪ್ರಸಾದವನೊಡಗೂಡಿದ ಬಸವರಾಜದೇವರು ಉತ್ತುಂಗಲಿಂಗದಲ್ಲಿ ಐಕ್ಯವಾಗುವನ್ನಬರ ಶಿವಲಿಂಗಪೂಜೆಯಂ ಬಿಟ್ಟ[ರೆ]? ಜಪ ತಪ ನಿತ್ಯ ನೇಮಂಗಳ ಬಿಟ್ಟ[ರೆ]? ಲಿಂಗಕ್ಕೆ ಕೊಟ್ಟು ಕೊಂಬ ಅರ್ಪಿತವಧಾನಂಗಳಂ ಬಿಟ್ಟ[ರೆ]? ತೀರ್ಥಪ್ರಸಾದದಲ್ಲಿ ಒಯ್ಯಾರಮಂ ಬಿಟ್ಟ[ರೆ]? ಮಾಡಿ ನೀಡುವ ದಾಸೋಹಮಂ ಬಿಟ್ಟ[ರೆ]? ಗುರುಲಿಂಗ ಜಂಗಮವ ಕಂಡು ಪೊಡಮಡುವುದಂ ಬಿಟ್ಟ[ರೆ]? ಬಿಜ್ಜಳನ ಓಲಗದ ಸಭಾಮಧ್ಯಕ್ಕೆ ಹೋಗಿ ತನ್ನ ದಿವ್ಯ ಶ್ರೀ ಪಾದಪದ್ಮಂಗಳಂ ಬಿಜ್ಜಳಂಗೆ ತೋರಿ ಅವನ ಕರ್ಮಾದಿಕರ್ಮಂಗಳಂ ಸುಟ್ಟು ಅವನ ರಕ್ಷಿಪುದಂ ಬಿಟ್ಟ[ರೆ]? ಇಂತಿವೆಲ್ಲವು ಕ್ರೀಯೋಗಗಳು. `ಕ್ರಿಯಾದ್ವೆ ೈತಂ ನ ಕರ್ತವ್ಯಂ ಜ್ಞಾನಾದ್ವೆ ೈತಂ ಸಮಾಚರೇತ್| ಕ್ರಿಯಾಂ ನಿರ್ವಹತೇ ಯಸ್ತು ಭಾವ ಶುದ್ಧಾಂತು ಶಾಂಕರಿ||' ಇಂತೆಂದುದಾಗಿ ಇದುಕಾರಣ ಐಕ್ಯವಾಗುವನ್ನಬರ ಕ್ರೀಯೊಳಗೊಂಡ ಶರಣಂಗೆ ನಿಜಮುಕ್ತಿಯಲ್ಲದೆ ಐಕ್ಯವಾಗುವುದಕ್ಕೆ ಮುನ್ನವೇ ಕ್ರೀಯಳಿದ ಶರಣನು ಸಾಯುಜ್ಯಪದಸ್ಥಲನಪ್ಪನಲ್ಲದೆ ಹರನಲ್ಲಿ ಸಮರಸವಿಲ್ಲವೆಂದೆನಯ್ಯಾ, ಘನಲಿಂಗಿಯ ಮೋಹದ ಚೆನ್ನಮಲ್ಲಿಕಾರ್ಜುನಾ.
--------------
ಘನಲಿಂಗಿದೇವ
ಕೋಟ್ಯನುಕೋಟಿ ಜಪವ ಮಾಡಿ ಕೋಟಲೆಗೊಳ್ಳಲದೇಕೆ ಮನವೆ ಕಿಂಚಿತು ಗೀತವೊಂದನಂತಕೋಟಿ ಜಪ. ಜಪವೆಂಬುದೇಕೆ, ಮನವೆ ಕೂಡಲಸಂಗನ ಶರಣರ ಕಂಡು, ಆಡಿ ಹಾಡಿ ಬದುಕು ಮನವೆ. 276
--------------
ಬಸವಣ್ಣ
ಆ ಪರಶಿವನ ಅಷ್ಟಾಂಗದಿಂದಾದ ಬ್ರಹ್ಮಾಂಡದ ಸ್ಥಿರ ಚರ ಪ್ರಾಣಿಗಳ ಲಯವ ನೋಡಿ ಚಿಂತೆಯೊಳಗಾಗಿ, ಕಂತುಹರನ ಧ್ಯಾನವ ಮಾಡಲು, ಆ ಹರ ಗುರುರೂಪವ ತಾಳ್ದು ಬಂದು, ತನ್ನ ಚಿಂತಿಸಿದ ಸುಜ್ಞಾನಿಗಳಿಗೆ, ಮನವನೊಬ್ಬುಳಿಗೊಳಿಸುವುದಕ್ಕೆ ಕಾರಣವೆಂದು ಹೇಳಿದ ಷಣ್ಮುಖ, ಶಾಂಭವಿ, ಖೇಚರಿ, ಭೂಚರಿ, ಸಾಚರಿ, ಕುರಂಗ, ಪಾಲೋತಕ, ಹಠ, ಲಯ, ಲಂಬಿಕ, ಮೊದಲಾದ ಅನಂತ ಮುದ್ರೆಗಳ ಸಾಧಿಸಿ, ಆ ಮುದ್ರೆ ಸಾಧನದಲ್ಲಿ ಕಂಡ, ಮಾಯ, ಛಾಯ, ಅಭ್ರಛಾಯ, ಪುರುಷಛಾಯ, ಮಿಂಚಿನ ಛಾಯ, ಬಳ್ಳಿಮಿರುಪಿನ ಛಾಯ, ಆರು ವರ್ಣದ ಛಾಯ, ಮೃತ್ಯುವಿನ ಛಾಯ, ಜೀವ ಜಪ ಮರಣ ಚಿನ್ನ ಕನಸಸಂಭ್ರಮ, ಕುಂಡಲಿನೋಟ, ಘೋಷಲಂಪಟ, ಮಾನಸಪೂಜೆ, ಬೈಲವಾಣಿ, ಪಶ್ಚಿಮಕೋಣೆ, ಆತ್ಮಭೆಟ್ಟಿ, ಮಂತ್ರಪಾಠ, ಒಳಬೆಳಗು, ಹೊರಬೆಳಗು ಪರಿಪರಿಯ ಬೆರಗುಗಳ ತಿಳಿದು, ಇದೇ ನಿಜಬ್ರಹ್ಮವೆಂದು ಹೆಮ್ಮೆ ೈಸಿ, ಆಸೆವೊಡಿಯದೆ, ಕ್ಲೇಶ ಕಡಿಯದೆ, ಘಾಶಿಯಾಗಿ ಹೇಸಕಿಯೊಳಗೆ ಮುಳಿಗಿ ಮುಂದುಗಾಣದೇ ಹೋದರು ನಿರುಪಮ ನಿರಾಳ ಮಹತ್ಪ್ರಭು ಮಹಾಂತಯೋಗಿ.
--------------
ಮಡಿವಾಳಪ್ಪ / ಕಡಕೋಳ ಮಡಿವಾಳಪ್ಪ
ಇನ್ನಷ್ಟು ... -->