ಅಥವಾ

ಒಟ್ಟು 85 ಕಡೆಗಳಲ್ಲಿ , 27 ವಚನಕಾರರು , 75 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಶ್ರೀಮತ್ಸಜ್ಜನ ಶುದ್ಧಶಿವಾಚಾರರಾಗಿ ಅಷ್ಟಾವರಣವೆ ಅಂಗವಾಗಿ, ಪಂಚಾಚಾರವೆ ಪ್ರಾಣವಾಗಿ, ಬಸವೇಶ್ವರದೇವರ ಸಾಂಪ್ರದಾಯಕರೆಂದು ನುಡಿದು ನಡೆದರೆ ಭಕ್ತರೆಂಬೆ, ಪುರಾತನರೆಂಬೆ. ಅಂತಪ್ಪ ಭಕ್ತಂಗೆ ಈ ಮೂಜಗವೆಲ್ಲ ಸರಿಯಲ್ಲವೆಂಬೆ. ಆ ಭಕ್ತಂಗೆ ಶಿವನ ಗದ್ದುಗೆಯೆ ಕೈಲಾಸವಾಗಿಪ್ಪುದು ನೋಡಾ. ಈ ಶಿವಾಚಾರದ ಪಥವನರಿಯದೆ ಇರುಳು ಹಗಲು ಅನಂತ ಸೂತಕಪಾತಕಂಗಳೊಳಗೆ ಮುಳುಗಾಡಿ ಮತಿಗೆಟ್ಟು ಪಂಚಾಂಗವ ಬೊಗಳುವ ಭ್ರಷ್ಟ ಮಾದಿಗರ ಮಾತು ಅಂತಿರಲಿ. ಪಂಚಾಂಗ ಕೇಳಿದ ದಕ್ಷಬ್ರಹ್ಮನ ತಲೆಯೇಕೆ ಹೋಯಿತು ? ಪಂಚಾಂಗ ಕೇಳಿದ ಪಂಚಪಾಂಡವರು ದೇಶಭ್ರಷ್ಟರಾದರೇಕೆ ? ಪಂಚಾಂಗ ಕೇಳಿದ ಶ್ರೀರಾಮನ ಹೆಂಡತಿ ರಾವಣಗೆ ಸೆರೆಯಾದಳೇಕೆ ? ಪಂಚಾಂಗ ಕೇಳಿದ ಇಂದ್ರನ ಶರೀರವೆಲ್ಲ ಯೋನಿಮಂಡಲವೇಕಾಯಿತು ? ಪಂಚಾಂಗ ಕೇಳಿದ ದ್ವಾರಾವತಿ ಪಟ್ಟಣದ ನಾರಾಯಣನ ಹೆಂಡಿರು ಹೊಲೆಮಾದಿಗರನ್ನು ಕೂಡಿದರೇಕೆ ? ಪಂಚಾಂಗ ಕೇಳಿದ ಸರಸ್ವತಿಯ ಮೂಗು ಹೋಯಿತೇಕೆ ? ಪಂಚಾಂಗ ಕೇಳಿದ ಕಾಮ ಸುಟ್ಟು ಭಸ್ಮವಾದನೇಕೆ ? ಪಂಚಾಂಗ ಕೇಳಿದ ಬ್ರಹ್ಮ ವಿಷ್ಣು ಇಂದ್ರ ಮೊದಲಾದ ಮೂವತ್ತುಮೂರುಕೋಟಿ ದೇವರ್ಕಳು ತಾರಕಾಸುರನಿಂದ ಬಾಧೆಯಾಗಿ ಕಂಗೆಟ್ಟು ಶಿವನ ಮೊರೆಯ ಹೊಕ್ಕರೇಕೆ ? ಕುರುಡ ಕುಂಟ ಹಲ್ಲುಮುರುಕ ಗುರುತಲ್ಪಕನ ಬಲವ ಕೇಳಲಾಗದು. ಶುಭದಿನ ಶುಭಲಗ್ನ ಶುಭವೇಳೆ ಶುಭಮುಹೂರ್ತ ವ್ಯತಿಪಾತ ದಗ್ಧವಾರವೆಂದು ಸಂಕಲ್ಪಿಸಿ ಬೊಗಳುವರ ಮಾತ ಕೇಳಲಾಗದು. ಗುರುವಿನಾಜ್ಞೆಯ ಮೀರಿ, ಸತ್ತರೆ ಹೊಲೆ, ಹಡೆದರೆ ಹೊಲೆ, ಮುಟ್ಟಾದರೆ ಹೊಲೆ ಎಂದು ಸಂಕಲ್ಪಿಸಿಕೊಂಬುವಿರಿ. ನಿಮ್ಮ ಮನೆ ಹೊಲೆಯಾದರೆ ನಿಮ್ಮ ಗುರುಕೊಟ್ಟ ಲಿಂಗವೇನಾಯಿತು ? ವಿಭೂತಿ ಏನಾಯಿತು ? ರುದ್ರಾಕ್ಷಿ ಏನಾಯಿತು ? ಮಂತ್ರವೇನಾಯಿತು ? ಪಾದೋದಕ ಪ್ರಸಾದವೇನಾಯಿತು ? ನಿಮ್ಮ ಶಿವಾಚಾರವೇನಾಯಿತು ? ನೀವೇನಾದಿರಿ ಹೇಳಿರಣ್ಣಾ ? ಅರಿಯದಿದ್ದರೆ ಕೇಳಿರಣ್ಣಾ. ನಿಮ್ಮ ಲಿಂಗ ಪೀತಲಿಂಗ; ನೀವು ಭೂತಪ್ರಾಣಿಗಳು. ನಿಮ್ಮ ಮನೆಯೊಳಗಾದ ಪದಾರ್ಥವೆಲ್ಲ ಹೆಂಡಕಂಡ ಅಶುದ್ಧ ಕಿಲ್ಬಿಷವೆನಿಸಿತ್ತು. ಇದ ಕಂಡು ನಾಚದೆ, ಮತ್ತೆ ಮತ್ತೆ ಶುಭಲಗ್ನವ ಕೇಳಿ, ಮದುವೆಯಾದ ಅನಂತ ಜನರ ಹೆಂಡಿರು ಮುಂಡೆಯರಾಗಿ ಹೋದ ದೃಷ್ಟವ ಕಂಡು ಪಂಚಾಂಗವ ಕೇಳಿದವರಿಗೆ ನಾಯಿ ಮಲವ ಹಂದಿ ಕಿತ್ತುಕೊಂಡು ತಿಂದಂತಾಯಿತ್ತು ಕಾಣಾ ನಿಸ್ಸಂಗ ನಿರಾಳ ನಿಜಲಿಂಗಪ್ರಭುವೆ.
--------------
ನಿರಾಲಂಬ ಪ್ರಭುದೇವ
ತನು ತರತರಂಬೋಗಿ, ಮನವು ನಿಮ್ಮಲ್ಲಿ ಸಿಲುಕಿತ್ತಯ್ಯಾ. ನೋಟವೇ ಪ್ರಾಣವಾಗಿ ಅಪ್ಯಾಯನ ನಿಮ್ಮಲ್ಲಿ ಆರತುದಯ್ಯಾ. ಸಿಲುಕಿತ್ತು ಶೂನ್ಯದೊಳಗೆ, ಗುಹೇಶ್ವರಾ ನಿರಾಳವಯ್ಯಾ !
--------------
ಅಲ್ಲಮಪ್ರಭುದೇವರು
ಸ್ಫಟಿಕದ ಘಟದೊಳಗಣ ಜ್ಯೋತಿಯಂತೆ, ಒಳಹೊರಗೆ ನೋಡುವಡೆ ಕಾಣಬರುತ್ತಿದೆ. ನುಡಿಸುವಂಥಾದಲ್ಲ, ಸಾರಿ ಇದ್ದಿಹುದು, ಮುಟ್ಟುವೊಡೆ ಕೈಗೆ ಸಿಕ್ಕದು. ಶಾಸ್ತ್ರಸಂಬಂಧದ ಕಲಿಕೆಯೊಳಗಲ್ಲ. ವ್ಯಕ್ತಾವ್ಯಕ್ತವನೊಳಕೊಂಡು ಬಯಲಸಮಾಧಿಯಲ್ಲಿ ಸಿಲುಕಿತ್ತು, ಸೌರಾಷ್ಟ್ರ ಸೋಮೇಶ್ವರಲಿಂಗವು ಪ್ರಾಣವಾಗಿ.
--------------
ಆದಯ್ಯ
ಭಕ್ತನ ಶ್ರದ್ಧೆ ಗುರುಲಿಂಗಜಂಗಮವೇ ಪ್ರಾಣವೆಂಬುದು. ಭಕ್ತನ ನಿಷ್ಠೆ ಪಂಚಾಕ್ಷರಿಯೇ ಪ್ರಾಣವೆಂಬುದು. ಭಕ್ತನ ಸಾವಧಾನ ಪ್ರಸಾದವೇ ಪ್ರಾಣವೆಂಬುದು. ಭಕ್ತನ ಅನುಭಾವ ರುದ್ರಾಕ್ಷಿಯೇ ಪ್ರಾಣವೆಂಬುದು. ಭಕ್ತನ ಆನಂದ ಪಾದೋದಕವೇ ಪ್ರಾಣವೆಂಬುದು. ಭಕ್ತನ ಸಮರಸ ಶ್ರೀ ವಿಭೂತಿಯೇ ಪ್ರಾಣವೆಂಬುದು. ಇಂತು ಅಷ್ಟಾವರಣ ಪ್ರಾಣವಾಗಿ, ನಡೆಯೇ ಪ್ರಕಾಶವಾಗಿರ್ದ ನಮ್ಮ ಗುರುನಿರಂಜನ ಚನ್ನಬಸವಲಿಂಗ ಮೆಚ್ಚುವಂತೆ.
--------------
ದೇಶಿಕೇಂದ್ರ ಸಂಗನಬಸವಯ್ಯ
ನಿಷ್ಠೆ ಘಟಿಸಿ ಕ್ರಿಯವಗ್ರಹಿಸಿ ಭಾವಭರಿತವಾಗಿ ಜ್ಞಾನವೆ ಅಂಗವಾಗಿ ಕ್ರಿಯೆ ಪ್ರಾಣವಾಗಿ, ಮತ್ತೆ ಜ್ಞಾನವೆ ಪ್ರಾಣವಾಗಿ ಕ್ರಿಯೆ ಅಂಗವಾಗಿ ಅಂಗಮನಕ್ರಿಭಾವ ಈ ಚತುರ್ವಿಧವೊಂದಾಗಿ, ಮತ್ತೆ ನಿಷ್ಠೆಘಟಿಸಿ ಕ್ರಿಜ್ಞಾನ ಎರಡ ವಿೂರಿನಿಂದ ಭಕ್ತವಿರಕ್ತನ ತೂರ್ಯದ ಕ್ರಿಯೆ ವೇಧಿಸಿ ನಿಂದವನ ನಿಲವು ಎಂತುಟೆಂದರೆ: ಕ್ರಿಯೆಂದರೆ ಇಷ್ಟಲಿಂಗ, ಅಂಗವೆಂದರೆ ಪ್ರಾಣಲಿಂಗ. ಆ ಪ್ರಾಣಲಿಂಗವ ಇಷ್ಟಲಿಂಗದಲ್ಲಡಗಿಸಿಕೊಂಡು ನಿಂದುದು ಎರಡಾಗಿ ಭಕ್ತನೆಂದು ಮಾಹೇಶ್ವರನೆಂದು ನಿಷ್ಠೆಯಲ್ಲಿ ನೆರೆನಿಂದಿರಲು ಮತ್ತಾ ನಿಷ್ಠೆಪಸರಿಸಿ ಆ ಭಕ್ತಮಾಹೇಶ್ವರರು ತಮ್ಮ ಮುನ್ನಿನ ನಿಷ್ಠೆಯ ಬಳಿಗೆ ಬಂದು ಎನ್ನಕ್ರಿ ನಿಮ್ಮಲ್ಲಿಯೇ ಅಡಗಿತ್ತು ಆ ಮುಕ್ತತ್ವದ ಕ್ರಿಯೊಳಗೊಂಡು ದೃಷ್ಟವ ಕಂಡು ಬರ....ಕೇಳಲಾಗಿ, ಎನ್ನ ಇಷ್ಟವಾಸರಿಸಿತ್ತೆಂದು ಹೇಳಲು ಸುಮ್ಮನೆ ಅವನ ಕೂಡೆ ಪ್ರಸಂಗಿಸಲಾಗದು. ಅದೇನು ಕಾರಣವೆಂದರೆ: ಮೊಟ್ಟ ಮೊದಲಲ್ಲಿ ಮೂರು ಭಿನ್ನವ ಕೇಳುವದು ಆ ಮೂರು ಭಿನ್ನಯೆಂತಾದವಯ್ಯಯೆಂದರೆ, ಅದರೊಳಗೈದು ಭಿನ್ನ ಉಂಟು. ಇಂತೀ ಎಂಟರೊಳಗೆ ನಾಲ್ಕು ಲಿಂಗದ ನೆಲೆ ಸಿಕ್ಕಿದರೆ ಅವೆಲ್ಲರಲ್ಲಿ ಬಂಧಿಸೂದು. ಅದಲ್ಲದೆ ನಿಂದರೆ ಮುಂದಣ ನಾಲ್ಕು ಅವನ ಭಾವವ ತೊರೆದು ನೋಡೂದು. ನೋಡಿ ನಿಶ್ಚಯವಾದ ಮತ್ತೆ ಕೂಡೆಯಿಟ್ಟುಕೊಂಡಿರ್ಪ ಸಮಯದಲ್ಲಿ, ಮೂಲಾಗ್ನಿಯ ಜ್ವಾಲೆಯಿಂದ ಮೇಲುವಾಯ್ದು ಒತ್ತಿಲಿರ್ದ ತನ್ನ ತೆತ್ತಿಗರ ನಿಲ್ಲದಂತೆ ನೀಕರಿಸುತ್ತಿರಲು, ಸಲಹಲಾರದ ತಾಯಿ ಶಿಶುವ ಬೈದು ಕೊಲುವಂತೆ ತಮ್ಮ ತ್ಯಾಗದ ಮೈಮರೆದಿರ್ದಾತನ ಎಚ್ಚರ ಮಾಡಿ, ನೀ ಮುನ್ನಲಿಂತಹವನೆಂದೆ ನುಡಿದು ಹೋಗುವ ನಿಷ್ಠೆ ಭಂಡರ ಗುಹೇಶ್ವರ ಸಾಕ್ಷಿಯಾಗಿ ಅಲ್ಲಯ್ಯನೊಲ್ಲ ಸಂಗನಬಸವಣ್ಣಾ.
--------------
ಅಲ್ಲಮಪ್ರಭುದೇವರು
'ನ ಗುರೋರದ್ಥಿಕಂ ನ ಗುರೋರದ್ಥಿಕಂ ನ ಗುರೋರಧಿಕಂ' ಎಂಬ ಹರವಾಕ್ಯವನರಿದು, ಲಿಂಗಾಚಾರಾದಿ ಪ್ರಾಣವಾಗಿ ಜಂಗಮನುಭಾವಪ್ರಸಿದ್ಭ ಪ್ರಮಾಣಚರಿತೆಯನರಿಯದೆ ಗೊಡ್ಡುಮಾತನೊಡ್ಡಿಕೊಂಡು ಎಡ್ಡೆಡ್ಡಿಂದೆ ವರ್ತಿಸುವ ಧಡ್ಡ ಕೋಟಲೆಯ ನೋಡಾ ! ಗುರುವೆನ್ನ ಕರಸ್ಥಲದಲುಂಟೆಂದು ಇರವ ಶೋಧಿಸಿ ಜರಿದು ಹರಿದು ಹಿರಿಯರೆನಿಸಿ ಮೆರೆವ ಗುರುದ್ರೋಹಿಗಳ ನೆರೆಯಲಾಗದು ನಡೆನುಡಿಸಂಪನ್ನರು ಗುರುನಿರಂಜನ ಚನ್ನಬಸವಲಿಂಗ ಸಾಕ್ಷಿಯಾಗಿ.
--------------
ದೇಶಿಕೇಂದ್ರ ಸಂಗನಬಸವಯ್ಯ
ಎನ್ನ ಸ್ಥೂಲತನುವಿಂಗೆ ಇಷ್ಟಲಿಂಗವಾದಾತ ಬಸವಣ್ಣ. ಎನ್ನ ಸೂಕ್ಷ್ಮತನುವಿಂಗೆ ಪ್ರಾಣಲಿಂಗವಾದಾತ ಬಸವಣ್ಣ. ಎನ್ನ ಕಾರಣತನುವಿಂಗೆ ಭಾವಲಿಂಗವಾದಾತ ಬಸವಣ್ಣ. ಎನ್ನ ದೃಕ್ಕಿಂಗೆ ಇಷ್ಟಲಿಂಗವಾದಾತ ಬಸವಣ್ಣ. ಎನ್ನ ಮನಕ್ಕೆ ಪ್ರಾಣಲಿಂಗವಾದಾತ ಬಸವಣ್ಣ. ಎನ್ನ ಭಾವಕ್ಕೆ ತೃಪ್ತಿಲಿಂಗವಾದಾತ ಬಸವಣ್ಣ. ಎನ್ನ ನಾಸಿಕಕ್ಕೆ ಆಚಾರಲಿಂಗವಾದಾತ ಬಸವಣ್ಣ. ಎನ್ನ ಜಿಹ್ವೆಗೆ ಗುರುಲಿಂಗವಾದಾತ ಬಸವಣ್ಣ. ಎನ್ನ ನೇತ್ರಕ್ಕೆ ಶಿವಲಿಂಗವಾದಾತ ಬಸವಣ್ಣ. ಎನ್ನ ತ್ವಕ್ಕಿಂಗೆ ಜಂಗುರುಲಿಂಗವಾದಾತ ಬಸವಣ್ಣ. ಎನ್ನ ಶ್ರೋತ್ರಕ್ಕೆ ಪ್ರಸಾದಲಿಂಗವಾದಾತ ಬಸವಣ್ಣ. ಎನ್ನ ಹೃದಯಕ್ಕೆ ಮಹಾಲಿಂಗವಾದಾತ ಬಸವಣ್ಣ. ಎನ್ನ ಸುಚಿತ್ತವೆಂಬ ಹಸ್ತಕ್ಕೆ ಆಚಾರಲಿಂಗವಾದಾತ ಬಸವಣ್ಣ. ಎನ್ನ ಸುಬುದ್ಧಿಯೆಂಬ ಹಸ್ತಕ್ಕೆ ಗುರುಲಿಂಗವಾದಾತ ಬಸವಣ್ಣ. ಎನ್ನ ನಿರಹಂಕಾರವೆಂಬ ಹಸ್ತಕ್ಕೆ ಶಿವಲಿಂಗವಾದಾತ ಬಸವಣ್ಣ. ಎನ್ನ ಸುಮನವೆಂಬ ಹಸ್ತಕ್ಕೆ ಜಂಗಮಲಿಂಗವಾದಾತ ಬಸವಣ್ಣ. ಎನ್ನ ಸುಜ್ಞಾನವೆಂಬ ಹಸ್ತಕ್ಕೆ ಪ್ರಸಾದಲಿಂಗವಾದಾತ ಬಸವಣ್ಣ. ಎನ್ನ ಸದ್ಭಾವವೆಂಬ ಹಸ್ತಕ್ಕೆ ಮಹಾಲಿಂಗವಾದಾತ ಬಸವಣ್ಣ. ಎನ್ನ ಆಧಾರಚಕ್ರದಲ್ಲಿ ಆಚಾರಲಿಂಗವಾಗಿ ಮೂರ್ತಿಗೊಂಡಾತ ಬಸವಣ್ಣ. ಎನ್ನ ಸ್ವಾದಿಷ್ಠಾನಚಕ್ರದಲ್ಲಿ ಗುರುಲಿಂಗವಾಗಿ ಮೂರ್ತಿಗೊಂಡಾತ ಬಸವಣ್ಣ. ಎನ್ನ ಮಣಿಪೂರಕಚಕ್ರದಲ್ಲಿ ಶಿವಲಿಂಗವಾಗಿ ಮೂರ್ತಿಗೊಂಡಾತ ಬಸವಣ್ಣ. ಎನ್ನ ಅನಾಹತಚಕ್ರದಲ್ಲಿ ಜಂಗಮಲಿಂಗವಾಗಿ ಮೂರ್ತಿಗೊಂಡಾತ ಬಸವಣ್ಣ. ಎನ್ನ ವಿಶುದ್ಧಿ ಚಕ್ರದಲ್ಲಿ ಪ್ರಸಾದಲಿಂಗವಾಗಿ ಮೂರ್ತಿಗೊಂಡಾತ ಬಸವಣ್ಣ. ಎನ್ನ ಆಜ್ಞಾಚಕ್ರದಲ್ಲಿ ಮಹಾಲಿಂಗವಾಗಿ ಮೂರ್ತಿಗೊಂಡಾತ ಬಸವಣ್ಣ. ಎನ್ನ ಬ್ರಹ್ಮರಂಧ್ರದಲ್ಲಿ ನಿಃಕಲಲಿಂಗವಾಗಿ ಮೂರ್ತಿಗೊಂಡಾತ ಬಸವಣ್ಣ. ಎನ್ನ ಶಿಖಾಚಕ್ರದಲ್ಲಿ ಶೂನ್ಯಲಿಂಗವಾಗಿ ಮೂರ್ತಿಗೊಂಡಾತ ಬಸವಣ್ಣ. ಎನ್ನ ಪಶ್ಚಿಮಚಕ್ರದಲ್ಲಿ ನಿರಂಜನಲಿಂಗವಾಗಿ ಮೂರ್ತಿಗೊಂಡಾತ ಬಸವಣ್ಣ. ಎನ್ನ ವದನಕ್ಕೆ ಓಂಕಾರವಾದಾತ ಬಸವಣ್ಣ. ಎನ್ನ ಬಲದ ಭುಜಕ್ಕೆ ನಕಾರವಾದಾತ ಬಸವಣ್ಣ. ಎನ್ನ ಎಡದ ಭುಜಕ್ಕೆ ಮಕಾರವಾದಾತ ಬಸವಣ್ಣ. ಎನ್ನ ಒಡಲಿಂಗೆ ಶಿಕಾರವಾದಾತ ಬಸವಣ್ಣ. ಎನ್ನ ಬಲದ ಪಾದಕ್ಕೆ ವಕಾರವಾದಾತ ಬಸವಣ್ಣ. ಎನ್ನ ಎಡದ ಪಾದಕ್ಕೆ ಯಕಾರವಾದಾತ ಬಸವಣ್ಣ. ಎನ್ನಾ ಆಪಾದಮಸ್ತಕ ಪರಿಯಂತರ ಮಂತ್ರರೂಪಕಸಂಬಂಧವಾದಾತ ಬಸವಣ್ಣ. ಎನ್ನ ನಾದಕ್ಕೆ ಆಕಾರವಾದಾತ ಬಸವಣ್ಣ. ಎನ್ನ ಬಿಂದುವಿಂಗೆ ಉಕಾರವಾದಾತ ಬಸವಣ್ಣ. ಎನ್ನ ಕಳೆಗೆ ಮಕಾರವಾದಾತ ಬಸವಣ್ಣ. ಎನ್ನ ರುದ್ಥಿರಕ್ಕೆ ನಕಾರವಾದಾತ ಬಸವಣ್ಣ. ಎನ್ನ ಮಾಂಸಕ್ಕೆ ಮಕಾರವಾದಾತ ಬಸವಣ್ಣ. ಎನ್ನ ಮೇಧಸ್ಸಿಂಗೆ ಶಿಕಾರವಾದಾತ ಬಸವಣ್ಣ. ಎನ್ನ ಅಸ್ಥಿಗೆ ವಕಾರವಾದಾತ ಬಸವಣ್ಣ. ಎನ್ನ ಮಜ್ಜೆಗೆ ಯಕಾರವಾದಾತ ಬಸವಣ್ಣ. ಎನ್ನ ಸರ್ವಾಂಗಕ್ಕೆ ಓಂಕಾರವಾದಾತ ಬಸವಣ್ಣ. ಇಂತು ಬಸವಣ್ಣನೆ ಪರಿಪೂರ್ಣನಾಗಿ, ಬಸವಣ್ಣನೆ ಪ್ರಾಣವಾಗಿ, ಬಸವಣ್ಣನೆ ಅಂಗವಾಗಿ, ಬಸವಣ್ಣನೆ ಲಿಂಗವಾದ ಕಾರಣ, ನಾನು ಬಸವಣ್ಣಾ ಬಸವಣ್ಣಾ ಬಸವಣ್ಣಾ ಎಂದು ಬಯಲಾದೆನು ಕಾಣಾ, ಕಲಿದೇವರದೇವ.
--------------
ಮಡಿವಾಳ ಮಾಚಿದೇವ
ತತ್ವ ಅಂಗವಾಗಿ, ಪರತತ್ವ ಪ್ರಾಣವಾಗಿ, ಉಭಯದಲ್ಲಿ ನಿಂದ ನಿಜ ಹೊರಗಾಯಿತ್ತು, ಮನಸಂದ ಮಾರೇಶ್ವರಾ.
--------------
ಮನಸಂದ ಮಾರಿತಂದೆ
ಬ್ರಹ್ಮಂಗೆ ಇಚ್ಫಾಶಕ್ತಿಯಾಗಿದ್ದಲ್ಲಿ, ವಿಷ್ಣುವಿಂಗೆ ಕ್ರಿಯಾಶಕ್ತಿಯಾಗಿದ್ದಲ್ಲಿ, ರುದ್ರಂಗೆ ಜ್ಞಾನಶಕ್ತಿಯಾಗಿದ್ದಲ್ಲಿ, ಇಂತಿವರು ದಂಪತಿ ಸಹಜವಾಗಿ ಯುಗಜುಗಂಗಳ ಜೋಗೈಸುತ್ತಿದ್ದರು. ಬ್ರಹ್ಮಂಗೆ ಸರಸ್ವತಿಯೆಂದಾರು ! ವಿಷ್ಣುವಿಗೆ ಲಕ್ಷ್ಮೀದೇವಿಯೆಂದಾರು ! ರುದ್ರಂಗೆ ಉಮಾದೇವಿಯೆಂದಾರು ! ಬ್ರಹ್ಮ ಅಂಗವಾಗಿ, ವಿಷ್ಣು ಪ್ರಾಣವಾಗಿ, ರುದ್ರ ಉಭಯಜ್ಞಾನವಾಗಿ, ಅಂದು ತಾಳಿದ ಸಾಕಾರದ ಗುಡಿಯ ಐಕ್ಯನಾದ ಕಾರಣ, ಗುಮ್ಮಟನೆಂಬ ನಾಮವ ತಾಳಿ, ಅಗಮ್ಯೇಶ್ವರಲಿಂಗ ಗುಹೇಶ್ವರನಾದ.
--------------
ಮನುಮುನಿ ಗುಮ್ಮಟದೇವ
ಲೋಕದಿಚ್ಛೆಯ ನಡೆವವನಲ್ಲ, ಲೋಕದಿಚ್ಛೆಯ ನುಡಿವವನಲ್ಲ, ಲೋಕವಿರಹಿತ ಶರಣ, ಶರಣವಿರಹಿತ ಲೋಕವೆಂಬುದು ಕಾಣಬಂದಿತ್ತು ನೋಡಾ. ಲಿಂಗವೆ ಗೂಡಾಗಿ, ಜಂಗಮವೆ ಸ್ವಾಯತವಾಗಿ ಪ್ರಸಾದವೆ ಪ್ರಾಣವಾಗಿ ಪರಿಣಾಮದಲ್ಲಿ ಇಪ್ಪ ನೋಡಯ್ಯಾ. ಕೂಡಲಸಂಗಮದೇವಾ, ನಿಮ್ಮ ಶರಣ ಚೆನ್ನಬಸವಣ್ಣಂಗೆ ನಮೋ ನಮೋ ಎಂಬೆನು.
--------------
ಬಸವಣ್ಣ
ಕಾಯದೊಳಗೆ ಕಾಯವಾಗಿ, ಪ್ರಾಣದೊಳಗೆ ಪ್ರಾಣವಾಗಿ, ಮನದೊಳಗೆ ಮನವಾಗಿ ಭಾವದೊಳಗೆ ಭಾವವಾಗಿ ಅರಿವಿನೊಳಗೆ ಅರಿವಿನ ತಿರುಳಾಗಿ,_ಮರಹು ಮಾರಡೆಯಿಲ್ಲದೆ. ನಿಜಪದವು ಸಾಧ್ಯವಾದ ಬಳಿಕ ಆವುದು ವರ್ಮ, ಆವುದು ಕರ್ಮ ? ಆವುದು ಬೋಧೆ, ಆವುದು ಸಂಬಂಧ ? ನಾ ಹೇಳಲಿಲ್ಲ ನೀ ಕೇಳಲಿಲ್ಲ ! ಅದೇನು ಕಾರಣವೆಂದಡೆ ಬೆಸಗೊಂಬಡೆ ತೆರಹಿಲ್ಲವಾಗಿ ! ಗುಹೇಶ್ವರಲಿಂಗದಲ್ಲಿ ತೆರೆಮರೆ ಆವುದು ಹೇಳಯ್ಯಾ ಬಸವಣ್ಣಾ ?
--------------
ಅಲ್ಲಮಪ್ರಭುದೇವರು
ಸದಾಚಾರವೆ ಸಾಕಾರವಾಗಿ, ಸತ್ಪ್ರಣಮವೆ ಪ್ರಾಣವಾಗಿ, ಮಾಡುವ ಮಾಟವೆ ಕೈಯಾಗಿ, ಅರಿವೆಂಬ ಬಾಯಿಗೆ ಕುರುಹಿನ ಕೈ ಮರೆಯದೆ ಅರ್ಪಿಸಿತ್ತು. ಅಂಗಪ್ರಾಣ ಅರಿವು ಸಂಬಂಧ, ಅದು ಪ್ರಾಣಲಿಂಗಯೋಗ, ಬಂಕೇಶ್ವರಲಿಂಗದಲ್ಲಿ.
--------------
ಸುಂಕದ ಬಂಕಣ್ಣ
ಭಾಜನಕ್ಕೆ ಸರ್ವಾಂಗ ಮುಸುಕಿಟ್ಟಲ್ಲಿ ಸರ್ವವ್ಯಾಪಾರ ನಿರಸನವಾಗಿರಬೇಕು ; ಸರ್ವಸಂಗವನೊಲ್ಲದೆ ಇರಬೇಕು. ಒಡೆಯರು ಭಕ್ತರಲ್ಲಿ ನಿಗರ್ವಿಯಾಗಿ ಬಂದು ನಿಂದುದ ಜಂಗಮಲಿಂಗವ ಮುಂದಿರಿಸಿ, ಅವರು ಕೈಕೊಂಡು ಮಿಕ್ಕ ಪ್ರಸಾದವ ಲಿಂಗಕ್ಕೆ ಅರ್ಪಿತವ ಮಾಡಿ, ಗುರುಲಿಂಗಜಂಗಮದಲ್ಲಿ ಸಂದುಸಂಶಯವಿಲ್ಲದೆ ಆಚಾರವೆ ಪ್ರಾಣವಾಗಿ ನಿಂದುದು ರಾಮೇಶ್ವರಲಿಂಗದಂಗ.
--------------
ಅಕ್ಕಮ್ಮ
ಆದಿಯ ಅಂಗಮುಖಕ್ಕರ್ಪಿಸಿ, ಅನಾದಿಯ ಪ್ರಾಣ ಮುಖಕ್ಕರ್ಪಿಸಿ, ಮನವೆಂಬುದ ಅರಿವಿನ ಮುಖಕ್ಕರ್ಪಿಸಿ, ತಾನೆಂಬುದ ನಿರಾಕಾರದಲ್ಲಿ ನಿಲಿಸಿ, ಪರಿಣಾಮಪ್ರಸಾದದಲ್ಲಿ ತದ್ಗತವಾಗಿ, ಪ್ರಸಾದವೆ ಪ್ರಾಣವಾಗಿ ಪ್ರಸಾದವೆ ಕಾಯವಾಗಿ, ಪ್ರಸಾದವೆ ಜ್ಞಾನವಾಗಿ ಪ್ರಸಾದವೆ ಧ್ಯಾನವಾಗಿ, ಪ್ರಸಾದವೆ ಲಿಂಗಭೋಗೋಪಭಾಗವಾಗಿಪ್ಪ, ನಮ್ಮ ಗುಹೇಶ್ವರಲಿಂಗದಲ್ಲಿ ನಿಜಪ್ರಸಾದಿ ಮರುಳಶಂಕರದೇವರ ನಿಲವ ನೋಡಾ ಸಂಗನಬಸವಣ್ಣಾ.
--------------
ಅಲ್ಲಮಪ್ರಭುದೇವರು
ಗುರುಪ್ರಸಾದವನು ಪಡೆವೆನೆ ಎನಗಂಗವಿಲ್ಲ ಕಾಣಾ ! ಲಿಂಗಪ್ರಸಾದವ ಪಡೆವೆನೆ ಎನಗೆ ಮನವಿಲ್ಲ ಕಾಣಾ ! ಜಂಗಮಪ್ರಸಾದವ ಪಡೆವೆನೆ ಎನಗೆ ಪ್ರಾಣವಿಲ್ಲ ಕಾಣಾ ! ಗುರುನಿರಂಜನ ಚನ್ನಬಸವಲಿಂಗಾ ನೀವೆನ್ನಂಗ ಮನ ಪ್ರಾಣವಾಗಿ ತೆರಹಿಲ್ಲದಿರ್ಪ ಪರಮಸುಖಪ್ರಸಾದದೊಳೋಲಾಡುತಿರ್ದೆನು ಕಾಣಾ.
--------------
ದೇಶಿಕೇಂದ್ರ ಸಂಗನಬಸವಯ್ಯ
ಇನ್ನಷ್ಟು ... -->