ಅಥವಾ

ಒಟ್ಟು 3 ಕಡೆಗಳಲ್ಲಿ , 2 ವಚನಕಾರರು , 2 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಇಂತಪ್ಪ ಶ್ರೀವಿಭೂತಿಯ ಧರಿಸಲರಿಯದೆ ಶ್ವೇತ, ಪೀತ, ಕಪೋತ, ಮಾಂಜಿಷ್ಟ, ಮಾಣಿಕ್ಯವೆಂಬ ಪಂಚವರ್ಣದ ಗೋವಿಗೆ ಭೂಮಿಯ ಸಾರಿಸಿ ಆ ಭೂಮಿಯಲ್ಲಿ ಪಂಚಗೋವುಗಳ ಕಟ್ಟಿ, ಪೂಜೋಪಚಾರ ಮಾಡಿ, ಮಂತ್ರದಿಂದ ಅನ್ನ ಉದಕವ ಹಾಕಿ, ಆ ಗೋವಿನ ಸಗಣಿ ಭೂಮಿಗೆ ಬೀಳದೆ ಅಂತರದಲ್ಲಿಯೇ ಪಿಡಿದು, ಕುಳ್ಳು ಮಾಡಿ ಬಿಸಿಲಿಲ್ಲದೆ ನೆರಳಲ್ಲಿ ಒಣಗಿಸಿ, ಮಂತ್ರದಿಂದ ನೆಲ ಸಾರಿಸಿ, ಮಂತ್ರದಿಂದ ಸುಟ್ಟು ಭಸ್ಮವ ಮಾಡಿ, ಆ ಭಸ್ಮಕ್ಕೆ ಜಂಗಮಾರ್ಚನೆಯ ಮಾಡಿ, ಜಂಗಮದ ಪಾದೋದಕದಿಂದ ಆ ಭಸ್ಮವ ಮಂತ್ರದಿಂದ ಶುದ್ಧಸಂಸ್ಕಾರವ ಮಾಡಿ, ಇಂತಪ್ಪ ವಿಭೂತಿಯ ತ್ರಿಕಾಲದಲ್ಲಿ ಕ್ರೀಯವಿಟ್ಟು ಧರಿಸಿ ಲಿಂಗಾರ್ಚನೆಯ ಮಾಡಿದವರಿಗೆ ಸಕಲ ಕಂಟಕಾದಿಗಳ ಭಯ ಭೀತಿ ನಷ್ಟವಾಗಿ ಚತುರ್ವಿಧಫಲಪದಪ್ರಾಪ್ತಿ ದೊರಕೊಂಬುವದು. ಆ ಫಲಪದ ಪಡೆದವರು ವೃಕ್ಷದ ಮೇಲೆ ಮನೆಯ ಕಟ್ಟಿದವರು ಉಭಯರು ಒಂದೆ. ಅದೆಂತೆಂದಡೆ: ವೃಕ್ಷದ ಮೇಲೆ ಮನೆ ಕಟ್ಟಿದವರು ಆ ವೃಕ್ಷವಿರುವ ಪರ್ಯಂತರವು ಆ ಮನೆಯಲ್ಲಿರುವರು. ಆ ವೃಕ್ಷವು ಮುಪ್ಪಾಗಿ ಅಳಿದುಹೋದಲ್ಲಿ ನೆಲಕ್ಕೆ ಬೀಳುವರಲ್ಲದೆ, ಅಲ್ಲೆ ಸ್ಥಿರವಾಗಿ ನಿಲ್ಲಬಲ್ಲರೆ? ನಿಲ್ಲರೆಂಬ ಹಾಗೆ. ಸಾಲೋಕ್ಯ, ಸಾಮೀಪ್ಯ, ಸಾರೂಪ್ಯ, ಸಾಯುಜ್ಯವೆಂಬ ಚತುರ್ವಿಧಫಲಪದವ ಪಡೆದವರು ಆ ಫಲಪದವಿ ಇರುವ ಪರ್ಯಂತರವು ಸ್ಥಿರವಾಗಿ ಇರುವರಲ್ಲದೆ, ಆ ಫಲಪದವಿ ಕಾಲೋಚಿತದ ಮೇಲೇರಿ ಅಳಿದು ನಾಶವಾದ ಮೇಲೆ ಮರಳಿ ಭವಕ್ಕೆ ಬೀಳುವರಲ್ಲದೆ, ಅಲ್ಲಿ ಸ್ಥಿರವಾಗಿ ನಿಲ್ಲಲರಿಯರೆಂದು ನಿಮ್ಮ ಶರಣ ಕಂಡು ಅದು ಮಾಯಾಜಾಲವೆಂದು ತನ್ನ ಪರಮಜ್ಞಾನದಿಂ ಭೇದಿಸಿ ಚಿದ್‍ವಿಭೂತಿಯನೇ ಸರ್ವಾಂಗದಲ್ಲಿ ಧರಿಸಿ, ಶಿಖಿ-ಕರ್ಪುರದ ಸಂಯೋಗದ ಹಾಗೆ ಆ ಚಿದ್ಭಸ್ಮದಲ್ಲಿ ನಿರ್ವಯಲಾದನಯ್ಯಾ ನಿಮ್ಮ ಶರಣ ಕಾಡನೊಳಗಾದ ಶಂಕರಪ್ರಿಯ ಚನ್ನಕದಂಬಲಿಂಗ ನಿರ್ಮಾಯಪ್ರಭುವೆ.
--------------
ಕಾಡಸಿದ್ಧೇಶ್ವರ
ಆ ಪರಶಿವನ ಗರ್ಭದಲ್ಲಿರ್ದ ಬ್ರಹ್ಮಾಂಡದೊಳಗೆ ಪಿಂಡಾಂಡವಾದ ಪುಣ್ಯಾತ್ಮರು, ಬಿಂದುರೂಪಾಗಿ ಬಂದ ಸೂತಕ ಕಂಡು ಸಂದೇಹಗೊಂಡು, ಚಂದವಳಿದು, ಹಿಂದೆ ಬಂದಾ ಯೋನಿಯ ಕಿಸುಕುಳ ಮೂತ್ರದಕುಣಿಗೆ ಬೀಳಬಾರದೆಂದು ಹೇಯ ಹುಟ್ಟಿ ಸ್ತ್ರೀ ಭೋಗವ ಬಿಟ್ಟು, ವೈರಾಗ್ಯ ತಲಿಗೇರಿ, ಅನ್ನ ವಸ್ತ್ರವ ಕಳೆದು ಊರೊಳಗಿರಬಾರದೆಂದು ದೇಶ ಸಂಚಾರ ಮಾಡಿ, ಕಾಶಿ, ಕೇದಾರ, ರಾಮೇಶ್ವರ, ಶ್ರೀಶೈಲ, ಉಳವಿ, ಹಂಪಿ, ಗೋಕರ್ಣ ಮೊದಲಾದ ಅನಂತ ತೀರ್ಥವ ಮಿಂದು, ಸಾಯಬಾರದ ಅಂಗಸಿದ್ಧಿ, ಅಲಗುನೋಯಿಸದ ಘುಟಿಕಾಸಿದ್ಧಿ, ಹೇಳಿದ್ದಾಗುವ ವಾಕ್ಯಸಿದ್ಧಿ, ಹೆಸರುಹೇಳುವ ಬೆನಕನಸಿದ್ಧಿ, ರೋಗಕಳೆಯುವ ಮೂಲಿಕಿಸಿದ್ಧಿ, ಬೆರಗುಮಾಡುವ ಬೇತಾಳಸಿದ್ಧಿ, ಅಗ್ನಿಸ್ತಂಭನ, ಜಲಸ್ತಂಭನ, ಗಗನಕ್ಕೆ ಹಾರುವ ಯೋಗಸಿದ್ಧಿ, ದೂರದೃಷ್ಟಿ, ದೂರಶ್ರವಣ, ಸರ್ವದೃಷ್ಟಿ, ಉಂಡೂಟ, ಕಂಡ ಕನಸು, ಮನೋಬಯಕೆ, ಹಿಂದಿನ ಖೂನ, ಕನಸಸಾಕ್ಷಿ, ಇಂದ್ರಜಾಲ, ಮಹೇಂದ್ರಜಾಲ, ಸುವರ್ಣಜನನ, ಬಂಗಾಳಿ, ಮರಣಯೋಗ, ಪರಕಾಯಪ್ರವೇಶ, ರಾಜಯೋಗ, ರಾಜವಶ, ಜನವಶ, ಸ್ತ್ರೀವಶ, ಭಸ್ಮಸಿದ್ಧಿ, ಅಂಜನಸಿದ್ಧಿ, ಮೋಹನ, ವೈರಿಸ್ತಂಭನ, ವಾಯುಸ್ತಂಭನ, ಭೂತ, ಪ್ರೇತ, ಪಿಶಾಚಿ, ಬ್ರಹ್ಮರಾಕ್ಷಸ, ಜಟ್ಟಿಂಗ, ಹಿರೋಡ್ಯಾ, ಯಲ್ಲಮ್ಮಾ, ಪೋತಮ್ಮಾ, ಚಂಡಿಚಾಮುಂಡ್ಯಾದಿಗಳ ಮಾತನಾಡಿಸುವ ಮಂತ್ರಸಿದ್ಧಿ, ಹುಲಿ, ಹಲ್ಲಿ, ಕತ್ತಿ, ನರಿ, ಕಾಗಿ, ಹಾಲ್ಹಕ್ಕಿ ಮೊದಲಾದ ಮೃಗಪಕ್ಷಿಯ ಮಾತು ತಿಳಿಯುವ ಯಂತ್ರತಂತ್ರಸಿದ್ಧಿ, ಮಲಮೂತ್ರವನು ಬಿಡದ ಅಂತರಪಚನ ಅದೃಶ್ಯ ಅನಂತ ಆಹಾರ ಜೀವಸ್ತಂಭನ, ದೇವ ಪ್ರತ್ಯಕ್ಷ ಸಂಜೀವನ, ಬಂಧವಿಮೋಚನ, ದೃಷ್ಟಿ ಆಗಮನ, ಇಷ್ಟದಾಯಕ ಮನೋಗಮನ ಮೊದಲಾದ ಅನಂತ ಸಿದ್ಧಿಗಳಿಗಾಶೆ ಮಾಡಿ ಮಣ್ಣುಗಾಣದೇ ಹೋದರು ಅನಂತರು. ಅದು ಅಂತಿರಲಿ, ಫಲಪದವಿ ಪಡೆವೆವೆಂದು ಹಳ್ಳ, ಕೊಳ್ಳ, ನದಿತೀರ, ಅಡವಿ ಅರಣ್ಯ ಗುಡ್ಡ ಗಿರಿ, ಗವಿ ವಟವೃಕ್ಷ, ಸಂಗಮ, ಮಠ ಮಾನ್ಯ ಮೊದಲಾದ ಸುಸ್ಥಳದಲ್ಲಿ ಕುಳಿತು ನಿದ್ರೆ ಆಹಾರ ತೊರೆದು, ಆಸನವ ಬಲಿದು, ಮೌನ ಮುದ್ರೆಯ ಹಿಡಿದು, ವಾತ, ಅಂಬು, ಪರ್ಣ, ಕಲ್ಲು, ಹಣ್ಣು, ಬೂದಿ, ಹುಲ್ಲಿನ ರಸ, ನೆಲ, ಬೇರು, ಗಡ್ಡಿ ಮೊದಲಾದ ಆಹಾರವ ಕೊಂಡು, ಮೈಗೆ ಹುತ್ತೇರಿ, ಜಡಿಯಲ್ಲಿ ಆಲವ ಬೆಳೆದು, ಗಡ್ಡದೊಳು ಗೀಜಗವು ಮನಿ ಮಾಡಿರಲು, ಮನವಳಿಯದೆ, ಘನವ ತಿಳಿಯದೆ, ತನುವ ಉಳಿಯದೆ, ಪಂಚೇಂದ್ರಿಯ ಮಿಂಚು ತೊಳಿಯದೆ, ಹಳೆಹಂಚಾದರೋ ನಿರುಪಮ ನಿರಾಳ ಮಹತ್ಪ್ರಭು ಮಹಾಂತಯೋಗಿ.
--------------
ಮಡಿವಾಳಪ್ಪ / ಕಡಕೋಳ ಮಡಿವಾಳಪ್ಪ
-->